Connect with us

ನೆಲದನಿ

ಕುವೆಂಪು ಕಂಡರಿಸಿದ ಕನ್ನಡತನದ ದಾರ್ಶನಿಕತೆ

Published

on

  • ಡಾ.ಮೇಟಿ ಮಲ್ಲಿಕಾರ್ಜುನ, ಸಹ ಪ್ರಾಧ್ಯಾಪಕರು, ಭಾಷಾಶಾಸ್ತ್ರ ವಿಭಾಗ, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ಕುವೆಂಪು ಬರಹಗಳಲ್ಲಿ ‘ಕನ್ನಡತನ’ದ ವಿನ್ಯಾಸಗಳು ಹೇಗೆ ಮೈದಾಳಿವೆ ಎಂಬುದನ್ನು ಅವರ ಸಾಹಿತ್ಯಕ ಹಾಗೂ ವೈಚಾರಿಕ ಬರಹಗಳ ಮೂಲಕ ಕಂಡುಕೊಳ್ಳಬಹುದಾಗಿದೆ. ಕನ್ನಡತನ ಎನ್ನುವುದು ಕೇವಲ ನಾಡು ನುಡಿಗಳ ಗಡಿಗಳಿಗೆ ಸೀಮಿತವಾಗಿರುವ ವಿದ್ಯಮಾನವಾಗಿರದೇ, ಅದೊಂದು ವ್ಯಾಪಕ ಗ್ರಹಿಕೆ ಎನ್ನುವುದು ಇವರ ಇಡೀ ಬರಹಗಳ ಮೂಲಕ ಅನಾವರಣಗೊಂಡಿರುವುದನ್ನು ಕಾಣುತ್ತೇವೆ.

ಹಾಗೆಂದರೆ, ಕನ್ನಡತನ ಎನ್ನುವುದು ಸಂಕುಚಿತ ಗಡಿಗಳನ್ನು ಮೀರುವ ಮತ್ತು ಅಂತಹ ಸೀಮಿತ ಗಡಿಗಳನ್ನು ದಾಟುವ ವಿನ್ಯಾಸವನ್ನಾಗಿ ನೋಡುವ ಹಲವು ಸನ್ನಿವೇಶಗಳು ಕುವೆಂಪು ಅವರ ಅಭಿವ್ಯಕ್ತಿಗಳಲ್ಲಿ ಅತ್ಯಂತ ನಿಚ್ಚಳವಾಗಿವೆ. ಉದಾ.ಗೆ ನೀ ಮೆಟ್ಟುವ ನೆಲ, ಅದೆ ಕರ್ನಾಟಕ ನೀನೇರುವ ಮಲೆ ಸಹ್ಯಾದ್ರಿ’ ಎನ್ನುವ ಕವನದ ಸಾಲುಗಳು ಇರಬಹುದು ಇಲ್ಲವೇ ಅನಿಕೇತನ ಕವನ ಇರಬಹುದು ಅಥವಾ ಕನ್ನಡ ನಾಡು ನುಡಿ ಕುರಿತ ಪ್ರತಿಯೊಂದು ಗ್ರಹಿಕೆ ಮತ್ತು ಅಭಿವ್ಯಕ್ತಿಯಲ್ಲಿ ಕನ್ನಡತನದ ನಿರ್ವಚನೆಯನ್ನು ಕಾಣಬಹುದಾಗಿದೆ.

ಅಂದರೆ ಕುವೆಂಪು ಅವರ ‘ಅಭಿವ್ಯಕ್ತಿ’ ಮತ್ತು ‘ಗ್ರಹಿಕೆ’ಗಳಲ್ಲಿ ಕನ್ನಡತನ ಎಂಬ ಸಮೂಹ ಅಸ್ಮಿತೆ ಹೇಗೆ ಅನಾವರಣಗೊಂಡಿದೆ ಹಾಗೂ ಈ ಅಸ್ಮಿತೆಯನ್ನು ಗ್ರಹಿಸುವ ಸ್ವರೂಪಗಳು ಯಾವ ಬಗೆಯಲ್ಲಿ ಇವರ ಸಾಹಿತ್ಯ ಮತ್ತು ವೈಚಾರಿಕ ನಿರೂಪಣೆಗಳಲ್ಲಿ ನೆಲೆಗೊಂಡಿವೆ ಎನ್ನುವುದನ್ನು ನೋಡುವ ಜರೂರಿದೆ. ಮುಖ್ಯವಾಗಿ ಕಾವ್ಯ, ನಾಟಕ ಮತ್ತು ಕಥನ ಎಂಬೀ ಸೃಜನಶೀಲ ಅಭಿವ್ಯಕ್ತಿಗಳು ರೂಪಕ, ಪ್ರತಿಮೆ, ಸಂಕೇತಗಳ ಮುಖೇನ ಕನ್ನಡತನವನ್ನು ನಿರೂಪಿಸಿರುವ ಬಗೆಯನ್ನು ಇಲ್ಲಿ ಕಾಣುತ್ತೇವೆ. ಹಾಗೂ ವಿಮರ್ಶೆ ಮತ್ತು ವೈಚಾರಿಕ ಬರಹಗಳಲ್ಲಿ ಈ ಕನ್ನಡತನದ ವಿನ್ಯಾಸವು ತಿಳಿವಿನ ಬಗೆಗಳಾಗಿ (ಎಪಿಸ್ಟಮಿಕ್ ಮಾಡಲ್ಸ್) ಮೈದಾಳಿವೆ.

ದಿಟ ಸಾಹಿತ್ಯಕ ಮತ್ತು ವೈಚಾರಿಕ ಅಭಿವ್ಯಕ್ತಿಗಳ ಸ್ವರೂಪ ಬದಲಾಗುವುದರಿಂದ ಅವುಗಳ ಮೂಲಕ ಪ್ರತಿಪಾದಿಸುವ ತಿಳಿವಿನ ಸ್ವರೂಪವೂ ಬದಲಾಗುತ್ತದೆ. ಹಾಗಾಗಿಯೇ ಸೃಜನಶೀಲ ಅಭಿವ್ಯಕ್ತಿಗಳಲ್ಲಿ ಮೈದಾಳುವ ಕನ್ನಡತನ ಕುರಿತಾದ ನಿರೂಪಣೆಗಳು ಬಹುತೇಕವಾಗಿ ರೂಪಾತ್ಮಕವಾಗಿವೆ. ಆದರೆ ವೈಚಾರಿಕ ಬರಹಗಳಲ್ಲಿ ಏರ್ಪಡುವ ಈ ಕನ್ನಡತನದ ವಿನ್ಯಾಸ ಜ್ಞಾನ ಮೀಮಾಂಸೆಯ ಆಯಾಮವನ್ನು ಪಡೆದುಕೊಳ್ಳುತ್ತವೆ ಎಂಬುದು ಗಮನಾರ್ಹ.

ಆದರೆ ಈ ಎರಡೂ ಸನ್ನಿವೇಶದಲ್ಲಿಯೂ ಕುವೆಂಪು ಪ್ರತಿಮಾ ವಿಧಾನವನ್ನೇ ಅನುಸರಿಸುತ್ತಾರೆ ಎಂಬುದು ವಿಶೇಷ. ಲೋಕೋಪಯೋಗಿ ಮತ್ತು ಭಾವೋಪಯೋಗಿ ನೆಲೆಗಳನ್ನು ಅತ್ಯಂತ ಖಚಿತವಾಗಿ ನಿರ್ಧರಿಸುವ ಆಯಾಮಗಳು ಇವರ ಸಾಹಿತ್ಯಕ ಮತ್ತು ವೈಚಾರಿಕ ಬರಹಗಳಲ್ಲಿ ಯಥೇಚ್ಛವಾಗಿ ನೆಲೆಗೊಂಡಿವೆ.

ಭಾಷೆ ಮತ್ತು ಭಾಷಿಕ ಪರಿಕರಗಳನ್ನು ಕೇವಲ ಸಾಂಕೇತಿಕ ಪ್ರತಿನಿಧೀಕರಣದ ಮಾದರಿಯನ್ನಾಗಿ ಮಾತ್ರ ಉಪಯೋಗಿಸದೇ, ಅದೊಂದು ಜ್ಞಾನಶಿಸ್ತು, ಸಂವೇದನೆಯ ವಿನ್ಯಾಸ ಹಾಗೂ ಅನುಭವಗಳ ಮಾದರಿಗಳನ್ನು ಗುರುತಿಸುವ ಬಹುಮುಖ್ಯ ನೆಲೆಯೆನ್ನುವುದನ್ನು ಕುವೆಂಪು ಅತ್ಯಂತ ಪರಿಣಾಮಕಾರಿಯಾಗಿ ಗುರುತಿಸಿದ್ದಾರೆ. ಆದ್ದರಿಂದ ಭಾಷೆ ಬಗೆಗಿನ ಗ್ರಹಿಕೆಗಳು ಇವರ ಒಟ್ಟು ಅಭಿವ್ಯಕ್ತಿಯಲ್ಲಿ ಪ್ರಮುಖವಾಗುತ್ತವೆ.

ಇವುಗಳ ಮೂಲಕವೇ ಬದುಕಿನ ವಿವಿಧ ಲಯಗಳನ್ನು ಕಂಡುಕೊಳ್ಳಲೂ ಸಾಧ್ಯ ಅನ್ನುವುದನ್ನು ಕುವೆಂಪು ತೋರಿಸಿಕೊಟ್ಟಿದ್ದಾರೆ. ಕಾಲ-ದೇಶಗಳ ಹಂಗು ಮೀರಿದ ಪ್ರಸ್ತುತತೆ ನೆಲೆಗೊಳ್ಳುವುದು ಇಂತಹ ಭಾಷಿಕ ಕ್ರಾಂತಿಯಿಂದಲೇ ಎಂಬ ವಾಸ್ತವವನ್ನು ನಾವು ಮನಗಾಣುವುದಕ್ಕೆ ಸಾಕ್ಷಿಗಳು ನಮಗೆ ಕುವೆಂಪು ಗ್ರಹಿಕೆ ಮತ್ತು ಅಭಿವ್ಯಕ್ತಿಯಲ್ಲಿ ಲಭ್ಯವಾಗುತ್ತವೆ. ‘ಯಾವ ಕಾಲದ ಶಾಸ್ತ್ರವೇನು ಹೇಳಿದರೇನು ?ಎದೆಯ ದನಿಗೂ ಮಿಗಿಲು ಶಾಸ್ತ್ರವಿಹುದೇನು ? ಎಂದೋ ಮನು ಬರೆದಿಟ್ಟುದಿಂದೆಮಗೆ ಕಟ್ಟೇನು ? ನಿನ್ನೆದೆಯ ದನಿಯೆ ಋಷಿ ! ಮನು ನಿನಗೆ ನೀನು !’ ಎಂಬೀ ಕವನದ ನಿಲುವು ಯಾವ ಕಾಲ ದೇಶಕ್ಕೂ ಸೀಮಿತಗೊಳ್ಳದೇ ಮನುಜಮತ ಮತ್ತು ವಿಶ್ವಪಥದ ಚಹರೆಗಳಾಗಿ ನೆಲೆಗೊಂಡಿವೆ.

ಸಾಮಾಜಿಕ ಭಾಷಾಶಾಸ್ತ್ರೀಯ ವಿವೇಚನೆಗಳ ಮುಖೇನ ಭಾಷೆ ಮತ್ತು ಸಮಾಜಗಳ ಒಟ್ಟು ಸಂಬಂಧವನ್ನು ವಿಶ್ಲೇಷಿಸಿ ನೋಡಿದರೆ ಕುವೆಂಪು ಅವರ ಭಾಷಿಕ ನಿಲುವುಗಳ ಆಳದಲ್ಲಿ ಹುದುಗಿರುವ ವೈಚಾರಿಕ ಸ್ಥೈರ್ಯ ಹಾಗೂ ನೈತಿಕತೆಯ ಹೊಣೆಗಾರಿಕೆ ನಮಗೆ ಮನನವಾಗುತ್ತದೆ. ಮತಧರ್ಮದ ಪರಿಭಾಷೆ ಒದುಗಿಸುವ ಚಿಂತನಾ ಕ್ರಮ ಬೇರೇನೆ ಸಮಾಜಶಾಸ್ತ್ರೀಯ ವ್ಯಾಖ್ಯಾನಗಳಿಗೆ ಅನುವು ಮಾಡಿಕೊಡುವುದನ್ನು ಕುವೆಂಪು ಅವರು ಮನಗಂಡಿದ್ದರು.

ತತ್ವದರ್ಶನ, ಸಾಂಸ್ಕೃತಿಕ ಮುಖಾಮುಖಿಯ ನಿಲುವುಗಳು ನಮಗೆ ಅರ್ಥವಾಗಲು ಹಾಗೂ ಸಾಂಸ್ಕೃತಿಕ ಅನುಸಂಧಾನದ ಸ್ಪಷ್ಟ ಮಾನದಂಡಗಳು ನಮಗೆ ಲಭ್ಯವಾಗುವುದು ಭಾಷಿಕ ಕ್ರಾಂತಿಯಿಂದ ಎನ್ನುವ ವಾಸ್ತವ ಕುವೆಂಪು ಅವರಿಗೆ ಖಚಿತವಾಗಿತ್ತು.

ಹೊಸ ಪರಿಭಾಷೆ ಮತ್ತು ಹೊಸ ವಿಚಾರಗಳನ್ನು ಏಕತ್ರಗೊಳಿಸುವ ಬಹುದೊಡ್ಡ ವೈಚಾರಿಕ ಕ್ರಾಂತಿಗೆ ಕುವೆಂಪು ಅವರು ಕಾರಣವಾದರು. ಈಗಾಗಲೇ ನೆಲೆನಿಂತಿದ್ದ ಸಮಾಜಶಾಸ್ತ್ರದ ಪರಿಭಾಷೆಯ ಒಳಹುನ್ನಾರವನ್ನು ಅರ್ಥೈಸಿಕೊಳ್ಳಲು ಭಾಷಾಶಾಸ್ತ್ರ ಸಹಾಯ ಮಾಡಬಲ್ಲದು ದಿಟ. ಆದರೆ ಬದುಕಿನ ಸಂಕೀರ್ಣತೆಯನ್ನು ಬಿಡಿಸಿ ನೋಡುವ ನಿರೂಪಣೆಗಳು ಲಭ್ಯವಾಗದೇ ಈ ಒಳಹುನ್ನಾರವನ್ನು ಅರಿಯಲು ಭಾಷಾಶಾಸ್ತ್ರಕ್ಕೆ ಸಾಧ್ಯವೇ ಇಲ್ಲ.

ಆದರೆ ಕುವೆಂಪು ಅವರು ಏಕೆಕಾಲಕ್ಕೆ ಈ ಪರಿಭಾಷೆಗಳ ಚಹರೆಗಳನ್ನು ಬದಲಿಸುವ ಮತ್ತು ಒಳಹುನ್ನಾರಗಳನ್ನು ಖಚಿತವಾಗಿ ತಮ್ಮ ಅಭಿವ್ಯಕ್ತಿಗಳ ಮೂಲಕ ಮಂಡಿಸಿರುವುದನ್ನು ಯಾರಾದರೂ ಗುರುತಿಸಬಹುದು. ಅಲ್ಪಸಂಖ್ಯಾತರು, ಬಹುಸಂಖ್ಯಾತರು, ಮೇಲ್ವರ್ಗಗಳು, ಕೆಳವರ್ಗಗಳು ರೂಢಿಗತವಾಗಿ ಬಳಸುತ್ತಿದ್ದ ಪರಿಭಾಷೆಗಳು ಯಾವ ರೀತಿಯಲ್ಲಿ ಸಾಂಸ್ಕೃತಿಕ ಮತ್ತು ರಾಜಕೀಯ ಯಜಮಾನಿಕೆಯನ್ನು ನಿಭಾಯಿಸುತ್ತಿದ್ದವು ಎನ್ನುವುದನ್ನು ಸೂಚಿಸುವ ಸೂಚಕಗಳಾಗಿ ಒದಗಿ ಬಂದಿರುವುದನ್ನು ಪತ್ತೆಹಚ್ಚುವ ನಿಶಿತಮತಿ ಕುವೆಂಪು ಅವರಲ್ಲಿ ಎದ್ದು ಕಾಣುತ್ತದೆ.

ಭಾಷೆ ಒಂದು ಸಾಮಾಜಿಕ ವಾಸ್ತವವನ್ನು (ಸೋಶಿಯಲ್ ಫ್ಯಾಕ್ಟ್) ಬಿಂಬಿಸುವುದಷ್ಟೆಯಲ್ಲ, ಸಮೂಹಗಳ ಬದುಕು ಹೇಗೆ ಇಂತಹ ಸ್ಥಿತಿಯೊಂದಕ್ಕೆ ಒಗ್ಗಿಕೊಂಡಿವೆ ಎನ್ನುವ ಕಟುಸತ್ಯವನ್ನೂ ಅನಾವರಣಗೊಳಿಸುತ್ತವೆ. ಆದ್ದರಿಂದ ಹೊಸ ಸಾಮಾಜಿಕತೆಯನ್ನು ನೆಲೆಗೊಳಿಸಲು ಹೊಸ ಪರಿಭಾಷೆಗಳ ಅಗತ್ಯವಿದೆ ಎನ್ನುವುದನ್ನು ಕುವೆಂಪು ಅವರು ಬಲವಾಗಿ ನಂಬಿದ್ದರು.

ವೈಜ್ಞಾನಿಕ ದೃಷ್ಟಿ, ವಿಶ್ವಮಾನವತೆ, ಸಾಂಸ್ಕೃತಿಕ ರಾಜಕಾರಣ, ಕಾವ್ಯ, ಕಥನ ಹಾಗೂ ನಾಟಕಗಳು ಇತ್ಯಾದಿ ಸಂಕಥನಗಳು ಕನ್ನಡತನವನ್ನು ನಿರ್ವಚಿಸಲು ಕುವೆಂಪು ಅವರಿಗೆ ಅತ್ಯಂತ ಮುಖ್ಯ ಅಭಿವ್ಯಕ್ತಿ ಮಾದರಿಗಳಾಗುತ್ತವೆ. ಎಲ್ಲವನ್ನೂ ಕನ್ನಡತನ ಮತ್ತು ಕನ್ನಡತನದ ಅಸ್ಮಿತೆಯ ಸ್ವರೂಪವನ್ನು ನಿರ್ವಚಿಸುವ ಬಗೆಯನ್ನಾಗಿಯೇ ಕುವೆಂಪು ಅವರು ನಿರೂಪಿಸಿದ್ದಾರೆ. ಆದ್ದರಿಂದ ಪ್ರತಿಮಾ ವಿಧಾನವನ್ನು ಪರಿಣಾಮಕಾರಿಯಾಗಿ ತಮ್ಮ ಒಟ್ಟು ಅಭಿವ್ಯಕ್ತಿಯಲ್ಲಿ ಬಳಸಿಕೊಳ್ಳಲು ಸಾಧ್ಯವಾಯಿತು.

ಇಲ್ಲವಾದರೆ ಅವರ ಕಾದಂಬರಿಗಳು ಮತ್ತು ಕಾವ್ಯ ವಿಶೇಷವಾಗಿ ರಾಮಾಯಣ ದರ್ಶನಂ ಮಹಾಕಾವ್ಯವು ಇಷ್ಟೊಂದು ವೈಶಿಷ್ಟ್ಯತೆಯನ್ನು ಪಡೆದುಕೊಳ್ಳಲು ಆಗುತ್ತಿರಲಿಲ್ಲ. ತಮ್ಮ ವೈಚಾರಿಕ ಬರಹಗಳು, ವಿಮರ್ಶೆ, ನಾಟಕಗಳು, ಕಥನಗಳು, ಕಾವ್ಯ ಹಾಗೂ ಕವಿತೆಗಳನ್ನು ಅತ್ಯಂತ ವಿಶಿಷ್ಟ ಬಗೆಗಳನ್ನಾಗಿಸುವ ಇರಾದೆಯನ್ನು ಕುವೆಂಪು ಅವರು ಹೊಂದಿರುವುದನ್ನು ಈ ಎಲ್ಲ ವಿನ್ಯಾಸಗಳಲ್ಲಿ ನೋಡುತ್ತೇವೆ.

ಈ ಎಲ್ಲ ಪ್ರಕಾರಗಳ ವೈಶಿಷ್ಟ್ಯತೆಯನ್ನು ಕಂಡರಿಸಲು ಇವರು ಭಾಷೆಯನ್ನೇ ಪ್ರಧಾನ ಮಾನದಂಡವನ್ನಾಗಿ ಬಳಸಿಕೊಂಡಿದ್ದಾರೆ. ಈ ಪ್ರಕ್ರಿಯೆಯ ಮೂಲಕವೇ ಕನ್ನಡತನದ ಚಹರೆಗಳನ್ನೂ ಪತ್ತೆಹಚ್ಚುವುದಕ್ಕೂ ಇವರಿಗೆ ಸಾಧ್ಯವಾಗಿದೆ. ಸಾಮಾಜಿಕತೆ ಮತ್ತು ಕನ್ನಡತನದ ನಡುವಣ ನಂಟಸ್ತಿಕೆಯನ್ನು ರೂಪಿಸುವ ವಿಧಾನವೇ ಅತ್ಯಂತ ಮಾರ್ಮಿಕವಾಗಿದೆ.

ಏಕೆಂದರೆ ಕನ್ನಡದ ಕಾವ್ಯದೊಳಗೆ ಲೋಕದರ್ಶನದ ಮಾದರಿಗಳನ್ನು ಒಡಮೂಡಿಸಲು ಹಾಗೂ ವಿಶ್ವಮಾನವ ಪರಿಕಲ್ಪನೆಯನ್ನು ನೆಲೆಗೊಳಿಸಲು ಹೇಗೆ ಸಾಧ್ಯವಾಯಿತು ಅನ್ನುವುದನ್ನು ಶೋಧಿಸುವುದಕ್ಕೆ ಸಾಕಷ್ಟು ಅವಕಾಶಗಳನ್ನು ಕುವೆಂಪು ಅವರು ಭಾಷಿಕ ಚಲನೆಗಳ ಮೂಲಕವೇ ಅಣಿಗೊಳಿಸಿದ್ದಾರೆ.

ಯಾವುದನ್ನೂ ಇವರು ಕೇವಲ ಒಂದು ನೋಟವನ್ನಾಗಿ ಮಾತ್ರ ಬಿಂಬಿಸದೇ ಅದೊಂದು ಲೋಕಜ್ಞಾನದ ಗ್ರಹಿಕೆಯನ್ನಾಗಿ ಮಂಡಿಸುವ ತವಕವನ್ನು ಹೊಂದಿರುವುದು ನಮಗೆ ಮನವರಿಕೆಯಾಗುತ್ತದೆ. ನೇಗಿಲಯೋಗಿ, ದೇವರು ರುಜು ಮಾಡಿದನು, ಹೀರೆ ಹೂ, ಗೊಬ್ಬರ, ಕಲ್ಕಿ, ಸ್ವರ್ಗ ಬಾಗಿಲು ಯಕ್ಷಪ್ರಶ್ನೆ, ದೇವರು ಮತ್ತು ಪುಜಾರಿ ಇತ್ಯಾದಿ ಕವನಗಳನ್ನು ಪರಿಶೀಲಿಸಿ ನೋಡಬಹುದು.

ಜಲಗಾರ, ಸ್ಮಶಾನ ಕುರುಕ್ಷೇತ್ರಂ, ಶೂದ್ರ ತಪಸ್ವಿ, ರಾಮಾಯಣ ದರ್ಶನಂ ಹಾಗೂ ಕಾನೂರು ಹೆಗ್ಗಡತಿ ಮತ್ತು ಮಲೆಗಳಲ್ಲಿ ಮದುಗಳು ಪಠ್ಯಗಳನ್ನೂ ಈ ನೆಲೆಯಲ್ಲಿ ನೋಡುವುದು ಸೂಕ್ತ. ಈ ಎಲ್ಲ ಪಠ್ಯಗಳ ಇಡೀ ಗ್ರಹಿಕೆಯಲ್ಲಿ ಎದ್ದು ಕಾಣುವ ಬಗೆಯೇ ಕನ್ನಡತನದ ಚಹರೆಯಾಗಿದೆ.

ಈ ಚಹರೆ ಏಕಶಿಲಾಘನಾಕೃತಿಯಲ್ಲ ಅದು ಬಹುಳತೆಯ ವಿನ್ಯಾಸ ಎಂಬ ಚಿಂತನೆಯನ್ನೂ ಇಲ್ಲಿ ನೆಲೆಗೊಳಿಸಲಾಗಿದೆ. ನುಡಿಯೊಂದನ್ನು ಏಕಕಾಲಕ್ಕೆ ಸ್ಥಳೀಯತೆ ಮತ್ತು ವಿಶ್ವಾತ್ಮಕತೆಯ ಸಮಾನ ವಿದ್ಯಮಾನವನ್ನಾಗಿ ಬಿಂಬಿಸುವಲ್ಲಿ ಕುವೆಂಪು ಮತ್ತು ಬೇಂದ್ರೆಯವರು ಅತ್ಯಂತ ಪ್ರಮುಖ ಕವಿಗಳಾಗಿದ್ದಾರೆ.

ಕನ್ನಡತನ ಎನ್ನುವುದು ಕೇವಲ ಭಾಷಿಕ ಗುರುತಲ್ಲ ಅದೊಂದು ಸಾಮಾಜಿಕ, ಸಾಂಸ್ಕೃತಿಕ ಹಾಗೂ ರಾಜಕೀಯ ಗ್ರಹಿಕೆಗಳ ಮಾದರಿ. ಈ ಗ್ರಹಿಕಾ ಮಾದರಿ ಏಕರೂಪಿಯಾಗಿರದೇ, ಬಹುಳತೆಯಿಂದ ಕೂಡಿರುವ ವಿದ್ಯಮಾನ ಆಗಿರಬೇಕಾಗುತ್ತದೆ. ಈ ಬಹುಳತೆಯ ಚೌಕಟ್ಟಿನೊಳಗೆ ಕನ್ನಡ ನುಡಿಯ ಸಾಮಾಜಿಕ ವಿನ್ಯಾಸವನ್ನು ಅರಿಯುವುದಕ್ಕೆ ಬೇಕಾಗುವ ದಾರಿಗಳನ್ನು ಕುವೆಂಪು ಅವರು ಕಂಡುಕೊಂಡಿರುವುದನ್ನು ಅವರ ಒಟ್ಟು ಬರಹಗಳಲ್ಲಿ ನೋಡುತ್ತೇವೆ.

ನುಡಿ ಬಗೆಗಿನ ಸವಾಲುಗಳನ್ನು ಕುವೆಂಪು ಅವರು ಕೈಗೆತ್ತಿಕೊಂಡಿರುವ ಬಗೆಯೇ ಅತ್ಯಂತ ವಿಶಿಷ್ಟವಾಗಿರುವಂತಹದು. ನುಡಿ ಕುರಿತ ಇವರ ಈ ದಾರ್ಶನಿಕತೆ ಹೊಸ ಸಾಮಾಜಿಕ ವಿನ್ಯಾಸಕ್ಕೆ (ನ್ಯೂ ಸೋಶಿಯಲ್ ಆರ್ಡರ್) ತುಡಿಯುವ ಬಗೆಯಾಗಿದೆ. ಈ ವಿನ್ಯಾಸಗಳು ಸಮಾನತೆ, ಸಹಬಾಳ್ವೆ, ಸಹೋದರತೆ ಹಾಗೂ ಸಾಮಾಜಿಕ-ಸಾಂಸ್ಕೃತಿಕ ನ್ಯಾಯದ ನಿಲುವುಗಳನ್ನೂ ಒಳಗೊಂಡಿರುತ್ತವೆ. ತಳಸಮುದಾಯ ಮತ್ತು ಹೆಣ್ಣು ಮಕ್ಕಳ ಸಾಮಾಜಿಕ ವಿಮೋಚನೆಯ ಹೊಸ ದಾರಿಗಳನ್ನು ಕನ್ನಡತನದ ಹೊಸ ವ್ಯಾಖ್ಯಾಗಳ ಮೂಲಕ ಅಣಿಗೊಳಿಸುವ ದೊಡ್ಡ ಸಾಹಸವನ್ನು ಕುವೆಂಪು ಅವರು ಮಾಡಿದ್ದಾರೆ.

ಇವರಿಗೆ ಕನ್ನಡತನ ಎನ್ನುವುದು ಸಾಮಾಜಿಕ ಒಳಗೊಳ್ಳುವಿಕೆಯ ವಿನ್ಯಾಸವೂ ಆಗಿರುತ್ತದೆ. ಸಮಾಜವೆಂದರೆ ಅದೊಂದು ಬಹುಳತೆಯ ನೋಟಕ್ರಮ ಮತ್ತು ವಿಭಿನ್ನ ಲೋಕದೃಷ್ಟಿಗಳ ಆಗರ ಎಂಬುದನ್ನು ಕುವೆಂಪು ಮನಗಂಡಿದ್ದರು ಹಾಗೂ ಅದನ್ನು ತಮ್ಮ ಸಾಹಿತ್ಯಕ ನಿರೂಪಣೆಗಳ ಮೂಲಕವೂ ಸಾಧಿಸಿ ತೋರಿಸಿದರು. ಈ ಇಡೀ ಪ್ರಕ್ರಿಯೆಯಲ್ಲಿ ಅನುಭವದ ನೆಲೆ ಮತ್ತು ಭಾಷೆಗಳ ನಡುವಣ ಅನುಸಂಧಾನದ ಮಾದರಿಗಳು ಮಹತ್ವವನ್ನು ಪಡೆದುಕೊಳ್ಳುತ್ತವೆ. ಹಾಗಾಗಿಯೇ ಗುತ್ತಿ, ತಿಮ್ಮಿ, ಪೀಂಚಲು, ಜಲಗಾರ, ಶಂಭೂಕ, ಏಕಲವ್ಯ ಇವರ ವ್ಯಕ್ತಿತ್ವದ ಮಾದರಿಗಳು ಎಲ್ಲ ಕಾಲದ ಕನ್ನಡತನದ ಸೂಚಕಗಳಾಗಿ ರೂಪುಗೊಂಡಿವೆ.

ಕನ್ನಡತನದ ಅಭಿವ್ಯಕ್ತಿಯಾಗಿ ಭಾಷೆಯನ್ನು ರೂಪಿಸುವುದೆಂದರೆ ಅದು ಕೇವಲ ಭಾಷಿಕ ರಾಜಕಾರಣದ ನಿಲುವು ಮಾತ್ರವಾಗದೆ, ಸಮೂಹಗಳ ಇಡೀ ಬದುಕಿನ ಜ್ಞಾನಮೀಮಾಂಸೆಯೂ ಮತ್ತು ಚಹರೆಯೂ ಆಗಿ ನಿರ್ಮಾಣಗೊಂಡಿರುತ್ತದೆ. ಅಂದರೆ ಭಾಷೆಯೊಂದು ಕೇವಲ ರಾಜಕೀಯ-ಸಾಮಾಜಿಕ ಪ್ರಜ್ಞೆ ಮಾತ್ರವಾಗದೇ, ಸಮೂಹಗಳ ಬದುಕಿನ ಪ್ರಜ್ಞೆ ಮತ್ತು ಅಸ್ತಿತ್ವದ ಮೂಲನೆಲೆಯಾಗುವ ಪ್ರಕ್ರಿಯೆಯು ಏರ್ಪಡುತ್ತದೆ. ಪರಿಣಾಮವಾಗಿ ಭಾಷೆ ಎನ್ನುವುದು ವಿಮೋಚನೆಯ ನೆಲೆಯಾಗಿ ರೂಪುಗೊಳ್ಳುತ್ತದೆ.

ಕುವೆಂಪು ಅಂಥವರ ಸಾಹಿತ್ಯ ಅಭಿವ್ಯಕ್ತಿಯು ಸಾಮಾಜಿಕ ಮತ್ತು ಸಾಂಸ್ಕೃತಿಕ ನ್ಯಾಯದ ಪ್ರಶ್ನೆಗಳನ್ನು ಮುಂದಿಟ್ಟುಕೊಂಡೇ ಮೈದಾಳಿದೆ. ಹಾಗಾಗಿ ಬ್ರಾಹ್ಮಣ್ಯ ಮತ್ತು ವೈದಿಕ ಆಲೋಚನಾ ಕ್ರಮವನ್ನೇ ತನ್ನ ಒಡಲಲ್ಲಿ ಅಡಗಿಸಿಕೊಂಡಿದ್ದ ಭಾಷಿಕ ವಿನ್ಯಾಸಗಳನ್ನು, ಸಬಾಲ್ಟ್ರನ್ ಸಮೂಹಗಳ ಅಭಿವ್ಯಕ್ತಿಗೆ ಪೂರಕವಾಗಿ ಮರುವಿನ್ಯಾಸಗೊಳಿಸುವ ಒಂದು ದೊಡ್ಡ ಭಾಷಿಕ ತಿರುವು ಕುವೆಂಪು ಅವರ ಸಾಹಿತ್ಯ ಹಾಗೂ ವೈಚಾರಿಕ ಅಭಿವ್ಯಕ್ತಿಯಲ್ಲಿ ಕಾಣುತ್ತೇವೆ.

ಒಂದು ನಿರ್ದಿಷ್ಟ ಸಂಸ್ಕೃತಿ ಇಲ್ಲವೇ ಸಾಮಾಜಿಕ ಅಸ್ಮಿತೆಯ ಸಾಂಕೇತಿಕತೆಯನ್ನು ಪಡೆದುಕೊಂಡಿದ್ದ ಭಾಷೆಯನ್ನು ನಿರಾಕರಿಸುವುದೇ ಒಂದು ಸಾಹಿತ್ಯಕ ಕ್ರಾಂತಿಗೆ ಕಾರಣವಾಗುತ್ತದೆ ಎನ್ನುವುದನ್ನು ಇವರು ನಿರೂಪಿಸಿದ್ದಾರೆ. ಶೂದ್ರ, ದಲಿತ ಇಲ್ಲವೇ ತಳಸಮೂಹಗಳ ಸಾಹಿತ್ಯ ನಿರೂಪಣೆಗಳಿಗೆ ಒಗ್ಗೂವ ಪರಿಭಾಷೆ, ರೂಪಕ, ಪ್ರತಿಮೆಗಳನ್ನು ಹೊಸದಾಗಿ ಸೃಷ್ಟಿಸುವ ಪ್ರತಿಮಾ ವಿಧಾನದ ಸ್ಪಷ್ಟ ಚಹರೆಗಳು ಕುವೆಂಪು ಅವರ ಒಟ್ಟು ಸಾಹಿತ್ಯದಲ್ಲಿ ಮೇಳೈಸಿರುವುದನ್ನು ಯಾರಾದರೂ ಗುರುತಿಸಬಹುದು.

ಅಂದರೆ ಕಾವ್ಯ (ಲಯ), ಕಥೆ-ಕಾದಂಬರಿ (ಕಥನ) ಹಾಗೂ ನಾಟಕ (ಸಂಭಾಷಣೆಗೆ) ಪ್ರಕಾರಗಳಿಗೆ ಹೊಸದಾದ ವೈಚಾರಿಕ ಮೊನಚು ಮತ್ತು ಕಾವ್ಯಮೀಮಾಂಸೆ-ಸೌಂಧರ್ಯ ಮೀಮಾಂಸೆಯನ್ನು ನೆಲೆಗೊಳಿಸುವ ಇರಾದೆಯಿಂದ ಕುವೆಂಪು ಹೊಸ ನುಡಿಗಟ್ಟನ್ನು ಕಟ್ಟಿಕೊಂಡರು. ಇಡೀ ಈ ವಿನ್ಯಾಸಕ್ಕೆ ಒಂದು ತಾತ್ವಿಕ ಪಾತಳಿಯಾಗಿ ಭಾಷೆ ಕುವೆಂಪು ಅವರ ಗ್ರಹಿಕೆ ಮತ್ತು ಅಭಿವ್ಯಕ್ತಿಯಲ್ಲಿ ಕೆಲಸ ಮಾಡಿದೆ.

ಕುವೆಂಪು ಅವರಿಗೆ ಅಭಿವ್ಯಕ್ತಿ ಎನ್ನುವುದು ಕೇವಲ ರಸಾನುಭವದ ವಿದ್ಯಮಾನವಾಗದೇ, ಕ್ರಿಯೆ, ತತ್ವ, ಪ್ರತಿಭಟನೆಯ ಕುರುಹುಗಳನ್ನು ಸೂಚಿಸುವುದೇ ಆಗಿರುತ್ತದೆ. ಮುಂದೆ ದಲಿತ ಬಂಡಾಯದ ಸನ್ನಿವೇಶದಲ್ಲಿ ಚರ್ಚಿಸಿದಂತಹ ಲಿಟರೇಚರ್ ಆಫ್ ಆಕ್ಸನ್ ಹಾಗೂ ಲಿಟರೇಚರ್ ಆಫ್ ಪ್ರೊಟೆಸ್ಟ್ ಎಂಬಂತಹ ಅಭಿವ್ಯಕ್ತಿಯ ಮಾದರಿಗಳು ಅದಾಗಲೇ ಕುವೆಂಪು ಅವರಲ್ಲಿ ಅವತರಿಸಿಬಿಟ್ಟಿದ್ದವು.

ಹಾಗಾಗಿಯೇ ಕುವೆಂಪು ಅವರಿಗೆ ಅಭಿವ್ಯಕ್ತಿ ಎಂಬುದು ಮೂಲಭೂತವಾಗಿ ಸಾಮಾಜಿ-ಸಾಂಸ್ಕೃತಿಕ ತಾರತಮ್ಯಗಳನ್ನೂ ಹಾಗೂ ಅಧಿಕಾರ ಸಂಬಂಧದ ವಿನ್ಯಾಸಗಳನ್ನು ಪ್ರಕಟಿಸುವ ಕುರುಹುವಾಗಿ ಪರಿಣಮಿಸಿತ್ತು. ಮಾತೆಂಬುದು ಜೋತೀರ್ಲಿಂಗ ಎನ್ನುವ ಈ ಹೇಳಿಕೆ ಎನ್ಲೈಟನ್ಮೆಂಟಿನ ರೂಪಕವಾಗಿದೆ (ಬೆಳಕು). ಈ ಗ್ರಹಿಕೆ ಕುವೆಂಪು ಅವರಲ್ಲಿ ಅತ್ಯಂತ ನಿಚ್ಚಳವಾಗಿಯೇ ಒಡಮೂಡಿದೆ.

ಮಾತೆಂಬುದೇ ವಿಮೋಚನೆಯ ಹಾದಿ ಎಂಬುದನ್ನು ಬಲವಾಗಿ ನಂಬಿದ್ದ ಕುವೆಂಪು ಅವರು ಭಾಷೆಯ ಗ್ರಹಿಕೆ (ಅಂತಸ್ಥನೆಲೆ) ಮತ್ತು ಅಭಿವ್ಯಕ್ತಿ (ಅಸ್ಮಿತೆಯ ನೆಲೆ) ಎಂಬೀ ಎರಡೂ ಆಯಾಮಗಳನ್ನು ಬಹಳ ಖಚಿತವಾಗಿ ತಮ್ಮ ಸಾಹಿತ್ಯದಲ್ಲಿ ನೆಲೆಗೊಳಿಸಿದ್ದರು. ಇವರ ಅಭಿವ್ಯಕ್ತಿಯ ಮಾದರಿಗಳು ಪ್ರಕಟಗೊಂಡಿರುವುದು ಪ್ರತಿಮೆ, ರೂಪಕ ಹಾಗೂ ಸಾಂಕೇತಿಕವಾದದ್ದು ಎಂದು ಮೇಲ್ನೋಟದಲ್ಲಿ ಗುರುತಿಸಿದರೂ, ಈ ವಿನ್ಯಾಸವು ಈಗಾಗಲೇ ಹೇಳಿದಂತೆ ಪ್ರತಿಮಾ ವಿಧಾನದ ಮಾದರಿಯಾಗಿದೆ.

ಈ ಮಾದರಿಯನ್ನು ಮೆಟಾನಮಿಕ್-ಮೆಟಾಫರಿಕ್ (ರೋಮನ್ ಯಾಕೋಬ್ಸನ್ ಅವರ ಪರಿಕಲ್ಪನೆಗಳು) ಮಾದರಿಗಳ ಸಹಯೋಗದಿಂದ ನೆಲೆಗೊಂಡ ದೃಷ್ಟಿಕೋನವನ್ನಾಗಿ ಇವರ ಅಭಿವ್ಯಕ್ತಿಯಲ್ಲಿ ನೋಡಬಹುದು. ಈ ಬಗೆಯ ಸಂಕಥನವನ್ನು ಕಟ್ಟುವ ಪ್ರಕ್ರಿಯೆಯು ಅತ್ಯಂತ ಸಂಕೀರ್ಣವಾದದ್ದು ಎಂಬುದು ಇಲ್ಲಿ ಗೋಚರಿಸುತ್ತದೆ.

ಕಥೆ ನಿನ್ನದಾಡೊಡಂ..ಕೃತಿ ನನ್ನ ದರ್ಶನಂ ಮೂರ್ತಿವೆತ್ತೊಂದಮರ ಕೃತಿಯೆತ್ತಿ” ಹಾಗೂ “ಇತಿಹಾಸಮಲ್ತು, ಕಥೆಯಲ್ತು ಕಥೆ ತಾಂ ನಿಮಿತ್ತಮಾತ್ರಂ” ಎಂಬೀ ಕುವೆಂಪುವರ ಹೇಳಿಕೆಗಳು ಅವರ ಸಾಹಿತ್ಯದ ದಾರ್ಶನಿಕತೆಯನ್ನು ವಿವರಿಸುತ್ತವೆ. ಈ ದಾರ್ಶನಿಕತೆಯ ಆಕೃತಿಯನ್ನು ನಿರ್ಮಿಸಲು ಹೊಸ ಭಾಷೆ ಮತ್ತು ಪರಿಭಾಷೆಯನ್ನು ಕುವೆಂಪು ಅವರು ಅತ್ಯಂತ ಪರಿಣಾಮಕಾರಿಯಾಗಿ ರೂಪಿಸಿ ಬಳಸಿಕೊಂಡರು.

ಕುವೆಂಪು ಅವರೇ ಹೇಳಿಕೊಂಡಂತೆ, ದರ್ಶನ ಮುಖ್ಯವೇ ಹೊರತು ಕತೆಯಲ್ಲ. ಕಥೆ, ಇತಿಹಾಸ, ಬಹಿರ್ಘಟನೆ ಇವೆಲ್ಲ ಜಡವಾದರೆ ದರ್ಶನವೊಂದೇ ಚೈತನ್ಯ. ಜಡವನ್ನು ಚೈತನ್ಯವನ್ನಾಗಿ ಮಾರ್ಪಡಿಸುವ ಈ ಹಂಬಲದಲ್ಲಿ ಭಾಷೆಯನ್ನು ಒಂದು ಪ್ರಮುಖ ಅಸ್ತ್ರವನ್ನಾಗಿಯೇ ಇವರು ಬಳಸಿಕೊಂಡರು ಎನ್ನುವುದು ನನ್ನ ಅಭಿಮತ.

ಅಂದರೆ ಕುವೆಂಪು ಅವರ ಕ್ರಿಟಿಕಲ್ ಡಿಸ್ಕೋರ್ಸಗಳು ಅಂಚಿನ ವ್ಯಕ್ತಿ/ಸಮೂಹಗಳ ಅಸ್ತಿತ್ವ, ಅಸ್ಮಿತೆ, ಸಬಲೀಕರಣವನ್ನು ಕುರಿತು ನಿಗಾವಹಿಸುತ್ತವೆ. ವಸಾಹತುಶಾಹಿ ಹಾಗೂ ವೈದಿಕಶಾಹಿ ಪ್ರಭಾವಕ್ಕೆ ಒಳಗಾಗಿದ್ದ ಪ್ರತಿಯೊಂದು ಸಮುದಾಯವು ಆಯಾ ಪ್ರಭಾವದಿಂದ ಹೊರಬರದೇ, ಅದು ನೆಲೆಗೊಳಿಸಿರುವ ಅಧಿಕಾರ ಸಂರಚನೆಗಳಿಂದ ಪ್ರಭಾವಿತವಾಗಿರುತ್ತದೆ. ಆದ್ದರಿಂದ ವಸಾಹತುಶಾಹಿ/ವೈದಿಕಶಾಹಿಗೆ ಒಳಗಾಗಿದ್ದ ಸಮೂಹಗಳು ಕಿಳರಿಮೆ ಹಾಗೂ ಪರಾವಲಂಬನೆಯಿಂದ ಬಳಲುತ್ತಿರುತ್ತವೆ.

ಹಾಗಾಗಿಯೇ ವಸಾಹತುಶಾಹಿ ಸಂದರ್ಭದಲ್ಲಿ ನೆಲೆಗೊಂಡಿದ್ದ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ರಚನೆಗಳು ಇವತ್ತು ವಸಾಹತೋತ್ತರ ಸನ್ನಿವೇಶದಲ್ಲಿಯೂ ನಮ್ಮ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ಆರ್ಥಿಕ ಬದುಕುಗಳನ್ನು ಸೋಂಕಿಸಿರುತ್ತವೆ. ಏಕೆಂದರೆ, ವಸಾಹತುಶಾಹಿ ಅಥವಾ ವೈದಿಕಶಾಹಿ ವಿರೋಧಿ ರಾಷ್ಟ್ರೀಯತೆಯ ಚಹರೆಗಳು ಕೂಡ ಬೂರ್ಜ್ವಾ ಲಕ್ಷಣಗಳನ್ನು ಮೈಗೂಡಿಸಿಕೊಳ್ಳುವ ಹಾಗೂ ಆ ಮುಖೇನ ವಸಾಹತುಶಾಹಿ ಸನ್ನಿವೇಶದಲ್ಲಿ ಅತ್ಯಂತ ಪ್ರಬಲವಾಗಿದ್ದ ಸಾಮಾಜಿಕ ರಾಜಕೀಯ ಅಸಮಾನತೆಗಳು ಮರುಹುಟ್ಟು ಪಡೆಯುತ್ತವೆ ಎಂಬುದನ್ನೂ ಇಲ್ಲಿ ಕಾಣಬಹುದು.

ಈ ಒಟ್ಟು ಬದುಕಿನ ಸಂಕೀರ್ಣತೆಯನ್ನು ಬಿಡಿಸಿ ನೋಡುವ ಒಂದು ತಾತ್ವಿಕ ಚೌಕಟ್ಟನ್ನೊಂದು ಕುವೆಂಪು ಅವರು ಹೇಗೆ ರೂಪಿಸಿದ್ದಾರೆ ಅನ್ನುವುದನ್ನು ಅವರ ಇಡೀ ಅಭಿವ್ಯಕ್ತಿಯ ಮೂಲಕ ನಾವು ಅರಿಯಬಹುದಾಗಿದೆ. ಬದುಕಿನ ಯಾವ ಆಯಾಮವನ್ನು ಸಾಹಿತ್ಯ ಕೃತಿಯ ಮೂಲಕ ಪ್ರಚುರಪಡಿಸಬೇಕು ಎನ್ನುವ ಸಾಂಸ್ಕೃತಿಕ ರಾಜಕಾರಣದ ಸ್ಪಷ್ಟ ಕಲ್ಪನೆ ಕುವೆಂಪು ಅವರಿಗಿತ್ತು. ಸೃಜನಶೀಲ ಅಭಿವ್ಯಕ್ತಿಯ ಮೂಲಕವೇ ಸಮೂಹಗಳ ಎಲ್ಲ ಕಾಲದ ಬದುಕಿಗೂ ಅವಶ್ಯವಾಗುವ ವೈಚಾರಿಕ ಪಾತಳಿಯನ್ನಾಗಿ ಪರಿವರ್ತಿಸಿದ ದಾರ್ಶನಿಕ ಕುವೆಂಪು.

ಈ ಸಾಹಿತ್ಯಕ ಹಾಗೂ ವೈಚಾರಿಕ ನಿರ್ವಹಣೆಯನ್ನು ಭಾಷಿಕ ನಿಲುವುಗಳಿಂದ ಆಗು ಮಾಡಿರುವುದು ಅತ್ಯಂತ ಮಹತ್ವದ ತಿರುವು ಎಂಬುದನ್ನು ನಾವ್ಯಾರೂ ಅಲ್ಲಗಳೆಯುವಂತಿಲ್ಲ. ಅಂದರೆ ಹೊಸ ಜ್ಞಾನ ಸೃಷ್ಟಿಯೆನ್ನುವುದು ಕೇವಲ ಅನುಭವದ ಕ್ರೂಢೀಕರಣವಲ್ಲ ಬದಲಾಗಿ ಅದನ್ನು ಹೊಸ ನುಡಿಗಟ್ಟಿನ ಮೂಲಕ ಕಟ್ಟಿಕೊಡುವ ಬಗೆಯೇ ಮುಖ್ಯ. ಈ ಕೆಲಸವನ್ನು ಕುವೆಂಪು ಅತ್ಯಂತ ಸಮರ್ಥವಾಗಿ ಮಾಡಿರುತ್ತಾರೆ. ಕನ್ನಡ, ಕರ್ನಾಟಕ, ಕನ್ನಡಿಗರು ಎನ್ನುವ ಸಮೀಕರಣದ ಹಿಂದಿನ ಅತೀ ಸರಳೀಕೃತವಾದ ಗ್ರಹಿಕೆಯನ್ನು ಬುಡಮೇಲು ಮಾಡಿದ್ದಾರೆ.

ಈ ದೃಷ್ಟಿಯಿಂದಲೇ ಭಾಷೆ ಎನ್ನುವುದು ವಿಮೋಚನೆಯ ಅಸ್ತ್ರ ಎಂದು ಹೇಳಲಾಗುತ್ತದೆ. ಭಾಷೆ ಮತ್ತು ಭಾಷಿಕರ ಮನಸ್ಥಿತಿಯನ್ನು ಗೋಡೆಗಳ ಸ್ವರೂಪದಲ್ಲಿ ಕಲ್ಪಸಿಕೊಂಡಿರುವ ಸನ್ನಿವೇಶದಲ್ಲಿಯೇ ಅನಿಕೇತನದ ಕಲ್ಪನೆಯನ್ನು ಇವರು ರೂಪಿಸಿದರು. ಅಷ್ಟೆಯಲ್ಲದೇ ಲೌಕಿಕ ಮತ್ತು ಅಲೌಕಿಕ ಪರಿಕಲ್ಪನೆಗಳ ಮೂಲಕ ಬದುಕಿನ ಸಂವೇದನೆಯಲ್ಲಿ ಅಡಗಿಸಿದ್ದ ಡೈಕಾಟಮಿಯನ್ನು ನಿರಾಕರಿಸಿ, ಅವೆರಡನ್ನೂ ಮೇಳೈಸಿಕೊಂಡಿರುವುದೇ ಬದುಕು ಅನ್ನುವ ತಾತ್ವಿಕತೆಯನ್ನು ಇವರ ಸಾಹಿತ್ಯದಲ್ಲಿ ಕಾಣುತ್ತೇವೆ. ಅದಕ್ಕಾಗಿಯೇ ಮಲೆಗಳಲ್ಲಿ ಮದುಮಗಳು ಕಾದಂಬರಿಯ ಪೀಠಿಕೆಯಲ್ಲಿ ಹೇಳಿದ “ಇಲ್ಲಿ ಯಾರೂ ಮುಖ್ಯರಲ್ಲ ಯಾರೂ ಅಮುಖ್ಯರಲ್ಲ…” ಎಂಬೀ ಮಾತು ಬದುಕಿನ ದೊಡ್ಡ ದರ್ಶನವನ್ನು ಕೊಡುವ ಕೈವಲ್ಯವಾಗಿದೆ. ಆಲೋಚನೆ ಮತ್ತು ಭಾಷೆಗಳ ನಡುವಣ ಸಂಬಂಧದ ವಿಭಿನ್ನ ವಿನ್ಯಾಸಗಳು ಇಲ್ಲಿ ಅತ್ಯಂತ ನಿಚ್ಚಳವಾಗಿಯೇ ಕಾಣುತ್ತವೆ.

ಕಾಲದ ಬಿಕ್ಕಟ್ಟಿಗೆ ಕಾರಣವಾಗಿರುವ ಸಾಮಾಜಿಕ, ಧಾರ್ಮಿಕ, ರಾಜಕೀಯ ವಿದ್ಯಮಾನಗಳು ಕುವೆಂಪು ಅವರ ಸಾಹಿತ್ಯದಲ್ಲಿ ಅಂತರ್ಗತವಾಗಿವೆ ಎನ್ನುವುದನ್ನು ಈ ಭಾಷಿಕ ವಿನ್ಯಾಸಗಳು ಪ್ರತಿಪಾದಿಸುತ್ತವೆ.

ಸಂವೇದನೆ ಮತ್ತು ಅಭಿವ್ಯಕ್ತಿಯ ರೂಪ ಇವುಗಳ ನಡುವೆ ಇರುವ ಭಾಷೆಯ ಪಾತ್ರ ಹೇಗೆ ಬದಲಾಗಬೇಕು ಎನ್ನುವುದನ್ನು ಕುವೆಂಪು ಅವರಲ್ಲಿ ನೋಡಬಹುದು. ಅಂದರೆ ಭಾಷೆಯ ಜವಾಬ್ದಾರಿ, ಸೂಕ್ಷ್ಮತೆ ಹಾಗೂ ಬದ್ಧತೆ ಏನು? ಅದನ್ನು ನಾವು ರೂಪಿಸುವ ಬಗೆ ಯಾವುದು? ಸಮೂಹಗಳ ಬದುಕು ನೆಲೆಗೊಳ್ಳಲು ಭಾಷೆಯ ಪಾತ್ರ ಎಂತಹದು? ಎಂಬೆಲ್ಲ ಪ್ರಶ್ನೆಗಳಿಗೆ ಉತ್ತರಗಳು ಕುವೆಂಪು ಅವರಲ್ಲಿ ದೊರೆಯುತ್ತವೆ. ಈ ತಾತ್ವಿಕತೆಯನ್ನು ಅರಿಯಲು ಭಾಷೆ ಮತ್ತು ಸಾಹಿತ್ಯಗಳ ನಡುವಣ ಸಂಬಂಧವನ್ನು ಅರಿಯುವುದು ಅವಶ್ಯ. ಸಾಹಿತ್ಯ ಪಠ್ಯ ಸ್ವಭಾವತ ವಿಶಿಷ್ಟವಾಗಿರುವಂತಹದು.

ಇಲ್ಲಿ ಸಾಹಿತ್ಯ ಮತ್ತು ಭಾಷೆಗಳ ನಡುವಣ ವಿಶಿಷ್ಟ ಸಂಬಂಧ ಎಂತಹದು ಎನ್ನುವುದನ್ನು ಅರಿಯುವುದಕ್ಕೆ ಬೇಕಾದ ಇಲ್ಲವೇ ಪರಿಭಾವಿಸುವುದಕ್ಕೆ ಬೇಕಾದ ಅವಕಾಶವೂ ವ್ಯಕ್ತವಾಗುತ್ತದೆ. ಅಂದರೆ ಸಾಹಿತ್ಯದ ಮೂಲಕ ಏರ್ಪಡುವ ಯಾವುದೇ ಬಗೆಯ ಅನುಭವ ಹಾಗೂ ಅರಿವು ಇಲ್ಲವೇ ತಿಳಿವು ನಮಗೆ ಒಂದು ತಾತ್ವಿಕ ವಿನ್ಯಾಸವಾಗಿ ಭಾಷೆಯ ಮೂಲಕವೇ ಲಭ್ಯವಾಗುತ್ತವೆ. ಇಲ್ಲಿ ಭಾಷೆ ಅತ್ಯಂತ ಪ್ರಾಥಮಿಕ ವಿದ್ಯಮಾನವಾಗಿದೆ. ತಿಳಿವೊಂದು ಮೈದಾಳುವ ಸನ್ನಿವೇಶ ಹಾಗೂ ಸಂಬಂಧಗಳು ವಿಭಿನ್ನ ನೆಲೆಯಲ್ಲಿ ಅಸ್ತಿತ್ವದಲ್ಲಿರುತ್ತವೆ.

ಅಂದರೆ ಭಾಷಾಶಾಸ್ತ್ರ ಮತ್ತು ಇತರ ಜ್ಞಾನಶಿಸ್ತುಗಳ ನಡುವಣ ಸಂಬಂಧದಲ್ಲಿ ಈ ವಿನ್ಯಾಸವನ್ನು ಮನಗಾಣಬಹುದು. ಚರಿತ್ರೆ, ಸಮಾಜಶಾಸ್ತ್ರ, ಮಾನವಶಾಸ್ತ್ರ ಮೊದಲಾದ ಈ ಎಲ್ಲ ವಲಯಗಳಲ್ಲಿ ಮೈದಾಳುವ ತಿಳಿವು ಭಾಷೆಯನ್ನೇ ನೆಲೆಯಾಗಿಸಿಕೊಂಡಿರುತ್ತದೆ. ಏಕೆಂದರೆ, ಭಾಷಾಕೇಂದ್ರಿತ ವಾಸ್ತವಗಳು, ಸನ್ನಿವೇಶಗಳು, ನಿರೂಪಣೆ ಮುಂತಾದವುಗಳನ್ನು ಪರಿಶೀಲಿಸುವ ಇಲ್ಲವೇ ವಿಶ್ಲೇಷಿಸುವ ಮೂಲಕವೇ ತಿಳಿವಿನ ಸಾಧ್ಯತೆಯನ್ನು ನಿಚ್ಚಳವಾಗಿ ಅರಿಯಬಹುದು.

ಆದರೆ ದಿನನಿತ್ಯದ ಮಾತುಕತೆ, ಬದುಕಿನ ವ್ಯವಹಾರಗಳು, ಸಾಹಿತ್ಯ ಇಲ್ಲವೇ ಇನ್ನ್ಯಾವುದೇ ಜ್ಞಾನಶಿಸ್ತಿನಷ್ಟು ಸಂಕೀರ್ಣವಾಗಿರುವುದಿಲ್ಲ. ಅಂದರೆ ಯಾವುದೇ ಸಂಕಥನ ಓದು ಮತ್ತು ಭಾಷಾಶಾಸ್ತ್ರಗಳ ನಡುವೆ ಏರ್ಪಡುವಷ್ಟು ಸಂಕೀರ್ಣತೆ, ನಮ್ಮ ದಿನದ ಮಾತುಕತೆಗಳು ಗಹನತೆಯನ್ನು ಪಡೆದುಕೊಳ್ಳದೇ, ಸಹಜಸ್ಥಿತಿಯಲ್ಲಿಯೇ ತಮ್ಮ ಗುರಿ ಉದ್ದೇಶಗಳನ್ನು ಪೊರೈಸುತ್ತವೆ.

ಬದುಕಿನ ಇಂತಹ ಸಹಜ ಮಾತುಕತೆ, ಅನುಭವ ಅಥವಾ ನಿರೂಪಣೆಗಳನ್ನು ಲಿಂಗ್ವಿಸ್ಟಿಕ್ ಪ್ರ‍್ಯಾಗ್ಮಾಟಿಸಂ ಮತ್ತು ಸಂಕಥನ ವಿಶ್ಲೇಷಣೆಯ ಚೌಕಟ್ಟಿನಲ್ಲಿಟ್ಟು ನೋಡಿದರೆ, ಸಾಹಿತ್ಯ ಪಠ್ಯಗಳಲ್ಲಿರುವ ನಿರೂಪಣೆಗಳಷ್ಟೇ, ಇವು ಕೂಡ ಗಹನವಾಗಿ/ಗಂಭೀರವಾಗಿ ಇರುತ್ತವೆ ಎನ್ನುವ ವಾಸ್ತವವನ್ನು ಮನಗಾಣುತ್ತೇವೆ. ಬದುಕಿನ ದೈನಂದಿನ ದಂದುಗವೇ ಒಂದು ತಾತ್ವಿಕ, ಸಾಮಾಜಿಕ, ಸಾಂಸ್ಕೃತಿಕ, ಆರ್ಥಿಕ, ರಾಜಕೀಯ ಪರಿಪ್ರೇಕ್ಷ್ಯದಲ್ಲಿ ನೆಲೆಗೊಂಡು ಪ್ರಕಟಗೊಳ್ಳುತ್ತದೆ. ಆದ್ದರಿಂದ ಸಾಹಿತ್ಯ ಪಠ್ಯಗಳಲ್ಲಿ ಅಡಕವಾಗಿರುವ ಅನುಭವ ವಿಶೇಷವಾಗಿ ನಮ್ಮ ಬದುಕಿನ ದಾರ್ಶನಿಕತೆಯಾಗಿ ಕಾಣುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Published

on

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.

ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.

ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.

ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.

ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಕನ್ನಡಿಗರ ಮನದ ಜಾನಕಿ

ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.

ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.

ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.

ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ

ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.

ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.

ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.

ಧ್ವನಿಯೊಳಗಿದ್ದ ಸಾವಿರ ರೂಪಗಳು

ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.

ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ

ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.

ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.

ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ

ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.

ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.

ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.

ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.

ಸರಳತೆಯೇ ಅವರ ಅಲಂಕಾರ

ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.

ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ

ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.

ಸಂಗೀತ ಲೋಕದ ಕಂಬನಿ

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.

“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.

ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ

ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.

ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.

ಸ್ವರ ಮೌನವಾದರೂ…

ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.

ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.

ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.

ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ

Published

on

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.

ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.

ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.

ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.

ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.

ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.

ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.

ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.

ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.

ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.

ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.

ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.

ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending