Connect with us

ಅಂತರಂಗ

ಕುವೆಂಪು ಅವರಿಗೆ ಲಂಕೇಶರ ಎಂಟು ಪ್ರಶ್ನೆಗಳು

Published

on

ಕುವೆಂಪು ಅವರನ್ನು ನಾನು ಅಂದು ನೋಡಿದ್ದು ಎರಡನೆ ಸಲ. ನಾನು ನೋಡಲು ಬಂದಿರುವ ವಿಷಯ ತಿಳಿದು ಕೈಯಲ್ಲಿ ನನ್ನ ಪ್ರಶ್ನೆ ಮತ್ತು ತಮ್ಮ ಉತ್ತರಗಳಿಂದ ಕೂಡಿದ ಟೈಪ್ ಮಾಡಿದ ಹಾಳೆಗಳನ್ನು ಹಿಡಿದುಕೊಂಡು ಬಂದರು. ನಾನು ಮತ್ತು ಮಿತ್ರ ನೆಲಮನೆ ದೇವೇಗೌಡರು ನಮಸ್ಕರಿಸಿದೊಡನೆ ಕೂತು ಪ್ರಶ್ನೆ ಮತ್ತು ಉತ್ತರಗಳನ್ನು ಓದುತ್ತ ವಿವರಿಸತೊಡಗಿದರು.

ತಮಗೆ ಯಾವುದೇ ಜಾತಿಯ ಬಗ್ಗೆ ಒಣ ಅಭಿಮಾನವಾಗಲಿ ಅನಗತ್ಯ ಪೂರ್ವಗ್ರಹವಾಗಲಿ ಇಲ್ಲವೆಂದು ಸ್ಪಷ್ಟಪಡಿಸಿದರು. ಅವರ ಮಾತಿನಲ್ಲಿ ತಮ್ಮ ಉತ್ತರಗಳು ಜನಕ್ಕೆಲ್ಲಿ ತಿಳಿಯುವುದಿಲ್ಲವೋ ಎಂಬ ಆತಂಕವಿದ್ದಂತಿತ್ತು. ಆದ್ದರಿಂದ ತಮ್ಮ ಕೃತಿಗಳಿಂದ ಉದಾಹರಣೆ ಎತ್ತಿಕೊಂಡು ಮಾತಾಡಿದರು. ನಾನು ಅವೆಲ್ಲವನ್ನೂ ಓದಿದ್ದೆನಾದ್ದರಿಂದ ಆ ವಿವರಣೆ ಅನಗತ್ಯವಾಗಿತ್ತು. ಆದರೆ ಕುವೆಂಪು ಅವರಿಗೆ ಅದಮ್ಯ ಉತ್ಸಾಹವಿದೆ; ಈ ಸಮಾಜದ ಕೆಡಕುಗಳ ಬಗ್ಗೆ ಕೋಪವಿದೆ. ತಾವು ಎಷ್ಟೇ ಬರೆದರೂ ಮಾತಾಡಿದರೂ ಈ ಜನತೆ ಸರಿಹೋಗುತ್ತದೋ ಇಲ್ಲವೋ ಎಂಬ ಸಂದೇಹವಿದೆ. ಆದ್ದರಿಂದಲೇ ಹಲವೊಮ್ಮೆ ವ್ಯಗ್ರವಾಗಿ ಮಾತಾಡುತ್ತಾರೆ. ಅವರು ನನ್ನ ಪ್ರಶ್ನೆಗಳಿಗೆ ಉತ್ತರ ಹೇಳುತ್ತ ಹೊಸ ಸಾಹಿತ್ಯದ ಬಗ್ಗೆ ಮಾತಾಡಿರುವುದನ್ನೂ ಈ ಅರ್ಥದಲ್ಲೇ ತೆಗೆದುಕೊಳ್ಳಬೇಕೆಂದು ಕಾಣುತ್ತದೆ.

ಕಿರಿಯ ಲೇಖಕರು ಯಾರಿಗೂ ಅರ್ಥವಾಗದ ಗೊಂದಲಗಳಲ್ಲಿ ಸಿಲುಕಿಕೊಂಡು ತಮ್ಮನ್ನು ತಾವು ಮೋಸಗೊಳಿಸಿಕೊಳ್ಳುವ ಬದಲು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಳ್ಳಬೇಕೆಂದೂ ಸಮಾಜದ ಅನಿಷ್ಟಗಳನ್ನು ಸರಿಪಡಿಸಬೇಕೆಂದೂ ಅವರು ಸೂಚಿಸುತ್ತಾರೆ. ಇದು ಕಿರಿಯ ಬರಹಗಾರರು ಅನುಭವ ಪಡೆಯುವ ಬಗ್ಗೆ ಉತ್ತಮ ಹಿತವಚನ. ಇನ್ನೊಂದು ಬಗೆಯಲ್ಲಿ ಇದು ನೀತಿ ಪಾಠ. ಇವೆರಡೂ ಕುವೆಂಪು ಮಾತುಗಳಲ್ಲಿರುವುದು ಎಂಥವರಿಗೂ ಕಂಡು ಬರುತ್ತದೆ.

ಆವೊತ್ತು ಮಾತಾಡುವ ಮೂಡಲ್ಲಿದ್ದರು ಕುವೆಂಪು ನಾವಿಬ್ಬರೂ ಕೆಲಸದ ಮೂಡಿನಲ್ಲಿದ್ದೆವು. ಅವರು ತಮ್ಮ ‘ರಾಮಾಯಣ ದರ್ಶನಂ’ನಿಂದ ಓದಿ ತೋರಿಸುವುದಾಗಿ ಸೂಚಿಸಿ ಬೇರೊಂದು ವಿಷಯ ಎತ್ತಿಕೊಂಡು ವಿವರಿಸತೊಡಗಿದರು. ‘ಪಾಂಚಾಲಿ’ ವಿವಿಧ ತೊಡಕುಗಳಲ್ಲಿ ಸಿಲುಕಿದ್ದ ನಾನು ಮತ್ತು ದೇವೇಗೌಡರು ನಮಸ್ಕಾರ ಹೇಳಿ ಹೊರಬಿದ್ದೆವು.

ಕುವೆಂಪು ಒಂದು ಸಂಸ್ಥೆ ಅಥವಾ ದೇವತೆಯಾಗಿ ಹುಂಬರ ಮನಸ್ಸಿನಲ್ಲಿ ಬೆಳೆಯುತ್ತಿದ್ದ ವೇಳೆಗೆ ಸರಿಯಾಗಿ ಅವರು ಮೈಕೊಡವಿಕೊಂಡು ಹೊರಬಂದು ಮನುಷ್ಯರೂ ವಿಚಾರವಾದಿಗಳೂ ಆಗಿ ಮಾತಾಡುತ್ತಿದ್ದುದು ನನಗೆ ಸಂತಸ ಉಂಟುಮಾಡಿತ್ತು.

——————————————————————-

ಲಂಕೇಶ್: ಸಾಮಾನ್ಯವಾಗಿ ಸಾರ್ವಜನಿಕ ಸಭೆಗಳಲ್ಲಿ ಮತ್ತು ವಾದವಿವಾದಗಳಲ್ಲಿ ಭಾಗವಹಿಸದ ತಾವು ಈಚೆಗೆ ಹೀಗೆ ಭಾಗವಹಿಸುವ ಮೂಲಕ ತಮ್ಮ ವಿಶಿಷ್ಟ ಬಗೆಯ ಕೀರ್ತಿಗೆ ಕಳಂಕ ತಂದುಕೊಳ್ಳುತ್ತಿರಬಹುದೇ ಎಂಬ ಅಳುಕು ತಮ್ಮ ಅಭಿಮಾನಿಗಳಲ್ಲಿ ಕೆಲವರಿಗಿದೆ. ಈ ಬಗ್ಗೆ ತಮ್ಮ ಅಭಿಪ್ರಾಯವೇನು?

ಕುವೆಂಪು: ಕೀರ್ತಿಗಿಂತಲೂ ನನಗೆ ಹೆಚ್ಚು ಪ್ರಿಯವಾದದ್ದು ಸತ್ಯ. ಸತ್ಯ ಹೇಳಿದರೆ ಕಲುಷಿತವಾಗುವ ಕೀರ್ತಿ ಭ್ರಷ್ಟಾಚಾರದ ವಸ್ತುವಾಗುತ್ತದೆ. ಅಲ್ಲದೆ ‘ಕೀರ್ತಿಶನಿ’ ಎಂಬ ನನ್ನ ಸಾನೆಟ್ಟಿನಲ್ಲಿ ಅನೇಕ ವರ್ಷಗಳ ಹಿಂದೆಯೇ ನಾನು ಅದನ್ನು ‘ತೊಲಗಾಚೆ’ ಎಂದು ತೊಲಗಿಸಿದ್ದೇನೆ. ಆದರೂ, ಶ್ರೀ ಎ.ಆರ್. ಕೃಷ್ಣಶಾಸ್ತ್ರಿಗಳು ಹೇಳಿದಂತೆ, ಶನಿ ಒಮ್ಮೆ ಬೆನ್ನು ಹತ್ತಿದರೆ ಬಿಡುವುದಿಲ್ಲವಂತೆ. ನನ್ನ ಮತ್ತೊಂದು ಸಾನೆಟ್ ‘ಯಶೋಲಕ್ಷ್ಮಿ’ ಈ ವಿಚಾರವಾಗಿ ನನ್ನ ಭಾವನೆ ಏನು ಎಂಬುದನ್ನು ತಿಳಿಸುತ್ತದೆ. ಕೀರ್ತಿ ಕಲುಷಿತವಾಗುವುದಿರಲಿ ಅಪಕೀರ್ತಿಯೆ ಬಂದರು ಸತ್ಯ ಹೇಳುವುದನ್ನು ಬಿಡುವುದಿಲ್ಲ.

ಲಂಕೇಶ್: ಕೆಟ್ಟಿರಲಿ, ಕೆಡದಿರಲಿ ಭಾರತೀಯ ಸಂಸ್ಕೃತಿಯೆಂದರೆ ವೈದಿಕ ಸಂಸ್ಕೃತಿಯೇ ಎಂಬ ಅಭಿಪ್ರಾಯದ ಬಗ್ಗೆ ನಿಮಗೇನೆನ್ನಿಸುತ್ತದೆ?

ಕುವೆಂಪು: ಇದೊಂದು ತಪ್ಪು ಅಭಿಪ್ರಾಯ. ಭಾರತೀಯ ಸಂಸ್ಕೃತಿ ಬರಿಯ ವೈದಿಕವಲ್ಲ. ಅವೈದಿಕವೂ ಅದರ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಬೌದ್ಧ, ಜೈನಗಳಲ್ಲದೆ ನ್ಯಾಯ, ವೈಶ್ಲೇಷಿಕ, ಸಾಂಖ್ಯ, ಯೋಗ ದರ್ಶನಗಳೂ ವೇದದ ಪರಮ ಪ್ರಾಮಾಣ್ಯವನ್ನು ಅವಿಚಾರಕವಾಗಿ ಒಪ್ಪಬೇಕು ಅನ್ನುವುದಿಲ್ಲ. ನನ್ನದು ವಿಶ್ವಸಂಸ್ಕೃತಿ. ಅಭಾರತೀಯವೂ ಅದರಲ್ಲಿ ಸೇರಿದೆ. ಸನಾತನವೂ (ಪುರಾತನ ಅಲ್ಲ.) ಶಾಶ್ವತವೂ ಆಧ್ಯಾತ್ಮಿಕವೂ ವಿಚಾರ ಮತ್ತು ವಿಜ್ಞಾನಗಳಿಗೆ ಅವಿರುದ್ಧವೂ ಆಗಿರುವ ಸತ್ಯ ಎಲ್ಲಿಯೇ ಇರಲಿ ಅದನ್ನು ನಾನು ಸ್ವೀಕರಿಸಿದ್ದೇನೆ.

ಲಂಕೇಶ್: ಬ್ರಾಹ್ಮಣ ಜಾತಿಯಲ್ಲಿ ಹಲವು ಒಳಪಂಗಡಗಳಿದ್ದರೂ ಕೇವಲ ಒಂದು ಪಂಗಡವನ್ನು ನೀವು ಟೀಕಿಸಿದ್ದು ಕೇವಲ ಉದಾಹರಣೆಗೋ ಅಥವಾ ಆ ಪಂಗಡ ತೀರಾ ಮಲಿನಗೊಂಡಿದೆ ಎಂಬ ಕಾರಣಕ್ಕೋ?

ಕುವೆಂಪು: ನನ್ನ ಭಾಷಣ ಬ್ರಾಹ್ಮಣರಿಗಾಗಲಿ, ಮಾಧ್ವರಿಗಾಗಲೀ ನಿರ್ದೆಶಿಸಿದ್ದಲ್ಲ; ಒಕ್ಕೂಟದವರಿಗಾಗಿ ಮಾತ್ರ. ಜಗತ್ತಿನ ಪುರೋಹಿತಶಾಹಿ ಅವೈಚಾರಿಕ ಮತ್ತು ಅವೈಜ್ಞಾನಿಕ ಮೂಢ ಭಾವನೆಗಳ ಆಶ್ರಯದಲ್ಲಿ ಶ್ರೀ ಸಾಮಾನ್ಯರನ್ನು ಹೇಗೆ ವಂಚಿಸುತ್ತಾ ಬಂದಿದೆ ಎನ್ನುವುದನ್ನು ಕುರಿತು ವಿಚಾರವಾದಿಗಳಾಗಿ ಬಾಳನ್ನು ನಡೆಸಬೇಕು ಎನ್ನುವ ತರುಣರಿಗೆ ತಿಳಿಸುತ್ತಿದ್ದೆ. ಪ್ರಾಸಂಗಿಕವಾಗಿ, ನಾನು ಕೆಲವೇ ದಿನಗಳ ಹಿಂದೆ ಆ ಪುಸ್ತಕಗಳನ್ನು ಓದುತ್ತಿದ್ದು ಸಂಗತಿ ಮನಸ್ಸಿನಲ್ಲಿ ಹೊಚ್ಚ ಹೊಸದಾಗಿ ಇದ್ದುದರಿಂದ ಮಧ್ವ-ಜಯತೀರ್ಥರ ನಿದರ್ಶನಗಳನ್ನು ಕೊಟ್ಟೆನಷ್ಟೆ; ಆಮೇಲೆ ಗುಲ್ಲೆದ್ದ ಮತಭ್ರಾಂತರ ಗಲಾಟೆಯಿಂದಲೇ ಗೊತ್ತಾದದ್ದು ನಾನು ಎಂತಹ ಹೇಸಿಗೆಯ ಹೊಂಡಕ್ಕೆ ಕಲ್ಲು ಎಸೆದಿದ್ದೇನೆ ಎಂದು.

ಲಂಕೇಶ್: ತಮ್ಮ ಕಾವ್ಯದ ಮತ್ತು ಮುಖ್ಯ ಕಥಾಸಾಹಿತ್ಯದ (fiction) ಕೇಂದ್ರ ನಿಲುವು ವೈದಿಕ, ಆದರ್ಶಮಯ, ಅವಾಸ್ತವ ಎಂದು ಹಲವರು ಟೀಕಿಸುತ್ತಾರೆ. ಇದಕ್ಕೆ ತಮ್ಮ ಉತ್ತರವೇನು?

ಕುವೆಂಪು: ಅವರ ತಲೆ; ನನ್ನದು ವಿಶ್ವಪ್ರಜ್ಞೆ. ನಾನು ಭಾರತೀಯನಾಗಿ ಅದರಲ್ಲೂ ಕನ್ನಡಿಗನಾಗಿ ಹುಟ್ಟಿದ್ದರಿಂದ ಆ ಸಂಸ್ಕೃತಿಯ ಮತ್ತು ಆ ಭಾಷೆಯ ಪರಿಭಾಷೆಯನ್ನು ಅನಿವಾರ್ಯವಾಗಿ ಉಪಯೋಗಿಸುತ್ತೇನಷ್ಟೆ. ಸತ್ಯ ವೈದಿಕವಾಗಿ ಪ್ರಕಟವಾದ ಮಾತ್ರಕ್ಕೆ ಅಸತ್ಯವಾಗುವುದಿಲ್ಲ. ಆದರ್ಶಮಯವಾದ ಮಾತ್ರಕ್ಕೆ ಅವಾಸ್ತವವಾಗುವುದಿಲ್ಲ. ನನ್ನ ಭಾಷಣದ ಉದ್ದೇಶವೆ ಒಕ್ಕೂಟದ ಹುಡುಗರನ್ನು ಅಂತಹ ತಪ್ಪುದಾರಿಗೆ ಹೋಗದಿರುವಂತೆ ತಡೆಯಬೇಕು ಎಂಬುದಾಗಿತ್ತು. ಚಿನ್ನದ ಒಡವೆಯನ್ನು ಅಕ್ಕಸಾಲಿ ಮಾಡಿದ ಮಾತ್ರಕ್ಕೆ ಚಿನ್ನ ಅಸತ್ಯವಾಗುತ್ತದೆಯೇ? ಗ್ರಾವಿಟೇಶನ್ ಸಿದ್ಧಾಂತವನ್ನು ನ್ಯೂಟನ್ ಕಂಡುಹಿಡಿದ ಮಾತ್ರಕ್ಕೆ ಅದು ಕ್ರೈಸ್ತವಾಗುತ್ತದೆಯೇ? ವೇದದ ಋಷಿ ಸನಾತನ ಶಾಶ್ವತ ಸತ್ಯವನ್ನು ಸಾಕ್ಷಾತ್ಕರಿಸಿಕೊಂಡು ಅದಕ್ಕೆ ‘ಬ್ರಹ್ಮನ್’ ಎಂದು ಹೆಸರು ಕೊಟ್ಟ ಮಾತ್ರಕ್ಕೆ ಆ ಸತ್ಯ ಆ ಋಷಿಯ ಸೃಷ್ಠಿಯಾಗುತ್ತದೆಯೇ? ಆ ಸತ್ಯ ಋಷಿಗೆ ಪೂರ್ವದಲ್ಲಿಯೇ ಇದ್ದುದು; ಆ ಋಷಿ ಮಾತ್ರವಲ್ಲ ಮನುಷ್ಯರೆಲ್ಲ ಮುಗಿದ ಮೇಲೆಯೂ ಆ ಸತ್ಯಕ್ಕೆ ಚ್ಯುತಿ ಬರುವುದಿಲ್ಲ. ಗುರುತ್ವಾಕರ್ಷಣ ಶಕ್ತಿ ನ್ಯೂಟನ್ನಿಗೆ ಪೂರ್ವದಲ್ಲಿಯೂ ಇತ್ತು, ಮನುಷ್ಯ ಕುಲವೇ ನಾಶವಾದ ಮೇಲೆಯೂ ಇರುತ್ತದೆ.

ಅಂತಹ ಸತ್ಯವನ್ನು ನಿತ್ಯ, ಸನಾತನ ಶಾಶ್ವತ ಎನ್ನುತ್ತೇವೆ. ಬೇರೆ ಬೇರೆ ದೇಶಗಳು, ಬೇರೆ ಬೇರೆ ಭಾಷೆಗಳೂ ಬೇರೆ ಬೇರೆ ಹೆಸರು ಕೊಡಬಹುದಷ್ಟೆ. ನನ್ನ ಜೀವನ ದರ್ಶನ ಅಂತಹ ಅಚ್ಯುತ ಸತ್ಯದ ಮೇಲೆ ನಿಂತಿದೆ. ನನ್ನ ಸಾಹಿತ್ಯವೂ ಅದನ್ನೆ ಅಭಿವ್ಯಕ್ತಗೊಳಿಸುತ್ತದೆ. ಅದನ್ನು ‘ನಿಮ್ಮಲ್ಲಿ’ ಕೆಲವರು ‘ವೈದಿಕ’ ಎಂದು ನಿಂದಿಸುವಂತೆ ‘ಅವರಲ್ಲಿ’ ಕೆಲವರು ‘ಅವೈದಿಕ’ ಎಂದೂ ತಿರಸ್ಕರಿಸುತ್ತಾರೆ. ಆದರೆ ನನ್ನ ಸಾಹಿತ್ಯ ಉದ್ಭವಿಸುವುದು ಬದುಕಿನಿಂದ, ಬದುಕಿಗಾಗಿ; ಮತ್ತು ಬದುಕಿನಾಚೆಯ ಬದುಕಿಗಾಗಿ.

ಲಂಕೇಶ್: ಈಚೆಗೊಬ್ಬರು ತಮ್ಮ ಸಾಮಾಜಿಕ ವಿಮರ್ಶೆಯನ್ನು ಕುರಿತು ಹೇಳುತ್ತಾ ‘ಕುವೆಂಪು ಅವರ ಮಾತಿನಲ್ಲಿ ಬ್ರಾಹ್ಮಣ ವಿರೋಧಿ ಧ್ವನಿ ಕೇಳಿ ಬರುತ್ತಿದ್ದರೆ ಅದಕ್ಕೆ ಕಾರಣವನ್ನು ಅವರ ವೈಯಕ್ತಿಕ ಅನುಭವದಲ್ಲಿ ಹುಡುಕಬೇಕು’ ಎಂದಿದ್ದಾರೆ. ಇದಕ್ಕೆ ತಮ್ಮ ಪ್ರತಿಕ್ರಿಯೆ?

ಕುವೆಂಪು: ಶುದ್ಧ ಅಪಾರ್ಥ! ಮೊದಲನೆಯದಾಗಿ ಅದು ಬ್ರಾಹ್ಮಣ ವಿರೋಧಿ ಧ್ವನಿಯಲ್ಲ. ಅಂದರೆ ಬೌದ್ಧ, ಜೈನ, ಕ್ರೈಸ್ತ, ಇಸ್ಲಾಂ ಮತ್ತು ಲಿಂಗಾಯಿತ ಪುರೋಹಿತಶಾಹಿಯನ್ನೂ ಒಳಗೊಂಡಿದೆ. ನನ್ನ ಪುರೋಹಿತಶಾಹಿ ಖಂಡನೆಗೆ ಕಾರಣವನ್ನು ನನಗಿರಬಹುದಾದ ವೈಯಕ್ತಿಕ ಅನುಭವದಲ್ಲಿ ಹುಡುಕುವುದು ಅತ್ಯಂತ ಹಾಸ್ಯಾಸ್ಪದ. ನನ್ನ ಮೂವತ್ತು ನಲವತ್ತು ವರ್ಷದ ಹಿಂದಿನ ಬರಹವನ್ನು ಯಾರೋ ಒಬ್ಬರು ಅಂದು ಟೀಕಿಸಿದುದಕ್ಕಾಗಿ ಇಂದು ನಾನು ನಲವತ್ತು ವರ್ಷಗಳ ಮೇಲೆ ರೊಚ್ಚು ತೀರಿಸಿಕೊಳ್ಳುವುದಕ್ಕೆ ಹಾಗೆ ಮಾತನಾಡಿದೆನೆಂದು ಹೇಳುವುದು ನನ್ನ ವ್ಯಕ್ತಿತ್ವಕ್ಕೆ ಅತ್ಯಂತ ‘ಅಲ್ಪತನ’ ಆರೋಪಿಸಿದಂತಾಗುತ್ತದೆ. ನಾನು ಅಷ್ಟು ‘ಸಣ್ಣ’ವನಲ್ಲ. ನಲವತ್ತು ಐವತ್ತು ವರ್ಷಗಳಿಂದಲೂ ನಾನು ಗದ್ಯ, ಪದ್ಯ, ನಾಟಕ ಎಲ್ಲದರಲ್ಲಿಯೂ ಹೇಳುತ್ತಾ ಬಂದಿರುವುದನ್ನೆ ಮೊನ್ನೆಯು ಹೇಳಿದ್ದೇನೆ ಅಷ್ಟೆ. ಆದರೆ ಇವರು ಯಾರೂ ನೀವೂ ಸೇರಿ, ನನ್ನ ಬರಹಗಳನ್ನು ಅಷ್ಟು ಆಸ್ಥೆಯಿಂದ ಓದಿಯೇ ಇಲ್ಲ ಎಂಬುದು ನನ್ನ ಗುಮಾನಿ. ಇಡೀ ರಾಮಾಯಣದರ್ಶನವೆ ನನ್ನ ‘ದರ್ಶನ’ಕ್ಕೆ ಒಡ್ಡಿದ ಮಹಾ ಪ್ರತಿಮೆಯಾಗಿದೆ. (ನಿಮ್ಮ ಎರಡನೆಯ ಪ್ರಶ್ನೆಗೆ ಕೊಟ್ಟಿರುವ ಉತ್ತರವನ್ನೂ ನೋಡಬಹುದು.)

ಲಂಕೇಶ್: ‘ಬ್ರಾಹ್ಮಣ’ ‘ಶೂದ್ರ’ ‘ಮಣ್ಣಿನ ವಾಸನೆ’ ಇತ್ಯಾದಿ ಮಾತು ಬಹಳವಾಗಿ ಕೇಳಿಬರುತ್ತಿರುವ ಈ ಕಾಲದಲ್ಲಿ ಬ್ರಾಹ್ಮಣ, ಶೂದ್ರರ ಭಾಷೆ, ಅನುಭವ ದೃಷ್ಟಿಯನ್ನು ಕುರಿತ ತಮ್ಮ ವಿಶ್ಲೇಷಣೆ ಏನು?

ಕುವೆಂಪು: ಈ ಮಾತುಗಳೆಲ್ಲ ಮತ್ತೆ ಪುರೋಹಿತಶಾಹಿಯ ಪಿತೂರಿಯ ಟಂಕಸಾಲೆಯ ನಾಣ್ಯಗಳೆ. ನಿಮ್ಮನ್ನು ದಿಕ್ಕು ತಪ್ಪಿಸಿ ಬದುಕಿನ ಋಜುಮಾರ್ಗದಿಂದ ಕಟಂಕಿತ ಮಾರ್ಗಕ್ಕೆ ತಳ್ಳುವ ಉಪಾಯದಿಂದಲೆ ಅವರು ಅವನ್ನು ಹುಟ್ಟಿಸಿದ್ದಾರೆ. ನೀವೂ ಹಿಂದಿನಂತೆಯೇ ಇಂದು ಬೆಪ್ಪುಗಳಾಗಿ ಅದಕ್ಕೆ ವಶರಾಗಿ, ಜನರ ಬದುಕನ್ನು ಮತಮೌಢ್ಯದಿಂದ ಪಾರು ಮಾಡಿ ಅವರನ್ನು ವೈಚಾರಿಕ ಬುದ್ಧಿ ಮತ್ತು ವೈಜ್ಞಾನಿಕ ದೃಷ್ಟಿ ಸಂಪನ್ನರಾಗಿ ಪರಿವರ್ತಿಸಿ ಅವರ ಮನಸ್ಸು ಮತ್ತು ಹೃದಯಗಳನ್ನು ಬೆಳಗುವ, ಅವರ ಸೋತ ಹೃದಯಗಳನ್ನು ಹುರಿದುಂಬಿಸುವ, ಮತ್ತು ವರ್ಣ, ಜಾತಿ ಭೇದಭಾವನೆಗಳನ್ನೆಲ್ಲ ಕಸದ ಬುಟ್ಟಿಗೆ ತೂರಿ ಅವರನ್ನು ಸಮಾನತಾವಾದಿಗಳನ್ನಾಗಿ ಪರಿವರ್ತಿಸುವ ಸಾಹಿತ್ಯ ಸೃಷ್ಟಿ ಮಾಡುವ ಬದಲು, ಗುಂಪುಗಾರಿಕೆಗಲ್ಲದೆ ಮತ್ತೆ ಯಾರಿಗೂ ಬೇಡದ ಮತ್ತು ಯಾರಿಗೂ ಅರ್ಥವಾಗದ ‘ನವ್ಯ’ ನಾಮಕ ವಿಕಾರ ಸೃಷ್ಟಿಗೆ ಮರುಳಾಗಿ ಹೋಗಿದ್ದೀರಿ. ಅಂತಹ ಕೃತಕ ಅನುಕರಣೀಯ ಪಂಥಗಳನ್ನೆಲ್ಲ ನಿಮ್ಮ ಹೃದಯದಿಂದ ಕಿತ್ತೊಗೆದು, ನಿಮ್ಮವರ ಬದುಕನ್ನು ನೇರವಾಗಿ ನೋಡಿ ಅದರಿಂದ ಉದ್ಭವಿಸುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರನ್ನು ಮೇಲಕ್ಕೆತ್ತುವ ಧೀರಭಾವಗಳನ್ನೂ ಕ್ರಿಯಾಶೀಲ ಆದರ್ಶಗಳನ್ನೂ ನಿಮ್ಮ ಬರವಣಿಗೆಗಳಲ್ಲಿ ನೀಡಬೇಕಾಗಿರುವುದು ಸದ್ಯದ ನಿಮ್ಮ ಆದ್ಯ ಕರ್ತವ್ಯ. ಪುರೋಹಿತಶಾಹಿಯ ಮೆಚ್ಚುಗೆಗೂ ಹೊಗಳಿಕೆಗೂ ಹಾತೊರೆದು ಬಾಯಿ ಬಿಟ್ಟು ನಿಮ್ಮ ಪೌರುಷ ತೇಜಸ್ಸುಗಳಿಗೆ ಅಪಮಾನ ಮಡಿಕೊಳ್ಳುವುದನ್ನು ಒಡನೆಯೇ ನಿಲ್ಲಿಸಿಬಿಡಿ. (ಮಾನಸ ಗಂಗೋತ್ರಿಯಲ್ಲಿ ಏರ್ಪಡಿಸಿದ್ದ ಲೇಖಕರ ಗೋಷ್ಠಿಯನ್ನು ಉದ್ಘಾಟಿಸುತ್ತಾ ನಾನು ಮಾಡಿದ ಭಾಷಣವನ್ನು ಗಮನವಿಟ್ಟು ಓದಿ ನೋಡಿದರೆ ನನ್ನ ಅಭಿಪ್ರಾಯಗಳು ಸ್ಪಷ್ಟಗೊಳ್ಳುತ್ತವೆ.)

ಲಂಕೇಶ್: ಕನ್ನಡ ಸಾಹಿತಿಗಳು ಬಹುಕಾಲದಿಂದ ಈ ನಾಡ ಹೆಸರಿನ ಬದಲಾವಣೆ, ಕನ್ನಡ ಮಾಧ್ಯಮ ಕುರಿತು ಮಾತನ್ನಾಡುತಿದ್ದರೂ ಕೇವಲ ಹೆಸರಿನ ಬದಲಾವಣೆ ಮಾತ್ರ ಆಗಿ ಮಾಧ್ಯಮದ ಪ್ರಶ್ನೆ ಹಾಗೇ ಉಳಿದಿದೆ. ಇದು ಸಾಹಿತಿಯ ಪ್ರಭಾವದ ದೌರ್ಬಲ್ಯ ತೋರುತ್ತದೆಯೆ?

ಕುವೆಂಪು: ಹಾಗೇನಿಲ್ಲ, ಈಗಾಗಲೆ ತಕ್ಕಷ್ಟು ಕಾರ್ಯ ನಡೆದಿದೆ. ನಡೆಯುತ್ತಲೂ ಇದೆ. ಜನತೆ, ಸರಕಾರ, ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾಲಯಗಳು ಎಲ್ಲವೂ ಕನ್ನಡ ಮಾಧ್ಯಮ ತತ್ವವನೊಪ್ಪಿ ಕ್ರಿಯಾಶೀಲವಾಗಿ ಮುಂದುವರೆಯುತ್ತಿವೆ. ಅದು ಪೂರ್ತಿ ಕೈಗೂಡಲು ತುಸು ಸಮಯ ಬೇಕಾಗಬಹುದು ಅಷ್ಟೆ.

ಲಂಕೇಶ್: ಈ ನಾಡ ತರುಣರಿಗೆ ತಮ್ಮ ಹಿತವಚನವೇನು?

ಕುವೆಂಪು: ನನ್ನ ಸಾಹಿತ್ಯದಲ್ಲಿ- ಕತೆ, ಕಾದಂಬರಿ, ಭಾವಗೀತೆ, ಕಾವ್ಯ, ಮಹಾಕಾವ್ಯ, ಜೀವನ ಚರಿತ್ರೆ, ಭಾಷಣ, ವಿಮರ್ಶೆ ಇತ್ಯಾದಿ- ನಾನು ಹೇಳಬೇಕಾದ್ದೆಲ್ಲವನ್ನೂ ಹೇಳಿದ್ದೇನೆ. ಇಷ್ಟವಿರುವ ತರುಣರು ಅವುಗಳನ್ನು ಮನಸ್ಸಿಟ್ಟು ಓದಲಿ. ವಿಶೇಷವಾಗಿ, ಅದರ ಮುನ್ನುಡಿ ಸಹಿತ ‘ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ’ ಎಂಬ ಪುಸ್ತಕದ ನಾಲ್ಕು ಭಾಷಣಗಳನ್ನಾದರೂ ಓದಲಿ. ಆದರೆ ನಾಲ್ಕನ್ನೂ ಸಮಗ್ರವಾಗಿ ತೆಗೆದುಕೊಳ್ಳಬೇಕು, ಅಷ್ಟೆ.- ಸರ್ವೋದಯ, ಸಮನ್ವಯ ಮತ್ತು ಪೂರ್ಣದೃಷ್ಟಿ ಇವುಗಳೇ ಎಲ್ಲರ ಧ್ಯೇಯಮಂತ್ರಗಳಾಗಲಿ.

ಕೃಪೆ: -‘ಪಾಂಚಾಲಿ’ (ದೀಪಾವಳಿ-ರಾಜ್ಯೋತ್ಸವ ವಿಶೇಷ ಸಂಚಿಕೆ, ಪುಟ: 11-14, 1974)
ಸಂಪಾದಕರು: ಪಿ. ಲಂಕೇಶ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Published

on

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.

ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.

ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.

ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.

ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಕನ್ನಡಿಗರ ಮನದ ಜಾನಕಿ

ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.

ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.

ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.

ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ

ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.

ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.

ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.

ಧ್ವನಿಯೊಳಗಿದ್ದ ಸಾವಿರ ರೂಪಗಳು

ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.

ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ

ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.

ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.

ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ

ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.

ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.

ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.

ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.

ಸರಳತೆಯೇ ಅವರ ಅಲಂಕಾರ

ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.

ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ

ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.

ಸಂಗೀತ ಲೋಕದ ಕಂಬನಿ

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.

“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.

ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ

ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.

ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.

ಸ್ವರ ಮೌನವಾದರೂ…

ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.

ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.

ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.

ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಕವಿತೆ | ದೇವರ ಹೂವು

Published

on

~ ಡಾ. ಸಿ.ಬಿ.ಐನಳ್ಳಿ

ಊಟ ಮಾಟ ವೇಷ ಭಾಷೆ
ಪ್ರಾರ್ಥನೆ ಬೇರೆ ಬೇರೆ
ಪವಿತ್ರಪಠ್ಯ ಅವನದೊಂದು
ನನ್ನದಿನ್ನೊಂದಂತೆ

ನದಿ ದಂಡೆಯ ಮೇಲೆ
ನೋಟ ಬೆರೆತು ಮಾತು ಮರೆತು
ಮೈತ್ರಿ ಮೊಳೆಯಿತು
ಎಷ್ಟು ಬಿಗಿದಪ್ಪಿಕೊಂಡರೂ
ಉಳಿಯುತ್ತಿತ್ತು ನಡುವೆ ಸಣ್ಣ ಪೊಳ್ದಾಣ

ಹೂದೋಟದ ದುಂಬಿ ಸತತ ಮೂರು
ವಸಂತದ ಗಾಳಿ ಅಣಕಿಸಿದಾಗ
ಪರಾಗಸ್ಪರ್ಶಕೆ ಹೊಸ ಹೂವೊಂದು
ಅರಳಿ ನಿಂತಿತು
ಪೊಳ್ಳಿನ ನೆನಪೇ ಮಾಯವಾಗಿದೆ

ಎಳೆ ಹೂವು ಮೈಮರೆತು
ಹಾಡಿ ಓಡಿ ನಲಿಯುತಿದೆ
ಧರ್ಮ ನನ್ನ ಕಣ್ಣೊಳಗೆ ಜಿನುಗಿ
ಹನಿಯಾಗಿ ಜಾರುತಿದೆ

ಕವಿ ಪರಿಚಯ : ಡಾ. ಸಿ.ಬಿ.ಐನಳ್ಳಿ, ಸಹಾಯಕ ಪ್ರಾಧ್ಯಾಪಕರು, ಇಂಗ್ಲೀಷ್ ವಿಭಾಗ, ಕರ್ನಾಟಕ ಕಲಾ ಮಹಾವಿದ್ಯಾಲಯ, ಧಾರವಾಡ

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending