ದಿನದ ಸುದ್ದಿ

ಕಂದಾಯ ಹಾಗೂ ಪೊಲೀಸ್ ಇಲಾಖೆ ತಾಂತ್ರಿಕ ಅಡಚಣೆ ಪರಿಹಾರಕ್ಕಾಗಿ ‘ಭೂ ವ್ಯಾಜ್ಯ ಸಂಬಂಧಿ ಕಾರ್ಯಾಗಾರ’ : ಎಸ್ಪಿ ಸಿ.ಬಿ.ರಿಷ್ಯಂತ್

Published

on

ಸುದ್ದಿದಿನ,ದಾವಣಗೆರೆ : ಭೂ ವ್ಯಾಜ್ಯಗಳಿಗೆ ಸಂಬಂಧಿಸಿದಂತೆ ಮಾಲೀಕರು ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಕಂದಾಯ ಹಾಗೂ ಪೊಲೀಸ್ ಇಲಾಖೆಗಳಲ್ಲಿ ತಾಂತ್ರಿಕ ಅಡಚಣೆಗಳಿಂದ ಅಲೆದಾಡುವುದನ್ನು ತಪ್ಪಿಸುವ ಸಲುವಾಗಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಹೇಳಿದರು.

ಗುರುವಾರ ಜಿಲ್ಲಾ ಪೋಲೀಸ್ ವರಿಷ್ಟಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆ, ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖಾ ವತಿಯಿಂದ ಜಿಲ್ಲಾ ಪೋಲೀಸ್ ಇಲಾಖೆ ದಾವಣಗೆರೆ ಇವರ ಸಂಯೋಗದಲ್ಲಿ “ಭೂ ವ್ಯಾಜ್ಯಗಳ ಮತ್ತು ಕ್ರಿಮಿನಲ್ ಅಪರಾಧಕ್ಕೆ ಸಂಬಂಧಿಸಿದಂತೆ ಹಮ್ಮಿಕೊಂಡಿದ್ದ ಕಾರ್ಯಾಗಾರ” ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪೊಲೀಸ್ ಇಲಾಖೆಯ ಪ್ರಕರಣಗಳಲ್ಲಿ ಶೇ.50 ರಷ್ಟು ಭೂ ವ್ಯಾಜ್ಯಗಳಿಗೆ ಸಂಬಂಧಿಸಿರುತ್ತವೆ. ಅಂತಹ ಸಂದರ್ಭದಲ್ಲಿ ಭೂ ಮಾಲೀಕರು ಪೊಲೀಸ್ ಠಾಣೆಗೆ ದೂರು ದಾಖಲಿಸಲು ಬಂದಾಗ ಪೊಲೀಸ್ ಅಧಿಕಾರಿಗಳು ಅಂತಹ ಪ್ರಕರಣಗಳನ್ನು ಕಂದಾಯ ಇಲಾಖೆ ಅಥವಾ ನ್ಯಾಯಾಲಯದಲ್ಲಿ ಪರಿಹರಿಸಿಕೊಳ್ಳಿ ಎಂದು ಸಲಹೆ ನೀಡುತ್ತಾರೆ, ಏಕೆಂದರೆ ಕೆಲವು ಪ್ರಕರಣಗಳಲ್ಲಿ ಪೊಲೀಸರು ಮಧ್ಯ ಪ್ರವೇಶಿಸಲು ಸಾಧ್ಯವಾಗುವುದಿಲ್ಲ.

ಕಂದಾಯ ಹಾಗೂ ಭೂ ವ್ಯಾಜ್ಯಗಳ ವಿಷಯಗಳಲ್ಲಿ ಪೊಲೀಸ್ ಅಧಿಕಾರಿಗಳು ಪ್ರಕರಣಗಳನ್ನು ಬಗೆಹರಿಸಲು ಹಲವು ಬಾರಿ ಒಳ್ಳೆಯ ಉದ್ದೇಶದಿಂದಲೇ ಪ್ರಯತ್ನಿಸುತ್ತಾರೆ, ಆದರೆ ಅನೇಕ ಬಾರಿ ಪೊಲೀಸ್ ಇಲಾಖೆ ತೊಡಗಿಸಿಕೊಳ್ಳದಂತೆ ನ್ಯಾಯಾಲಯದ ಆದೇಶದಲ್ಲಿ ತಿಳಿಸಲಾಗಿದೆ. ಆದ್ದರಿಂದ ಯಾವ್ಯಾವ ಪ್ರಕರಣಗಳು ಕಂದಾಯ ಇಲಾಖೆ ಮತ್ತು ಸಿವಿಲ್ ನ್ಯಾಯಾಲಯದಲ್ಲಿ ಪರಿಹರಿಸಿಕೊಳ್ಳಬಹುದು ಎಂದು ತಿಳಿಸುವ ಉದ್ದೇಶದಿಂದ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ, ಇಡೀ ಆಡಳಿತ ವ್ಯವಸ್ಥೆ ನಾಗರಿಕ, ಜನಪರ, ಜನಮಯಿ, ಆಗಲು ಪ್ರತಿಯೊಬ್ಬರೂ ಅವರವರ ಅಧಿಕಾರ ಸದುಪಯೋಗ ಪಡಿಸಿಕೊಳ್ಳಬೇಕು. ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಮುಖ್ಯ, ಭೂ ವ್ಯಾಜ್ಯಗಳಿಗೆ ಸಂಬಂಧಪಟ್ಟ ಪ್ರಕರಣಗಳಲ್ಲಿ ಜನರನ್ನು ಅಲೆದಾಡಿಸದೆ ನ್ಯಾಯ ಒದಗಿಸುವ ಉದ್ದೇಶದಿಂದ ಈ ಕಾರ್ಯಗಾರ ಹಮ್ಮಿಕೊಳ್ಳಲಾಗಿದೆ ಹಾಗಾಗಿ ಕಾರ್ಯಗಾರದ ಉಪಯೋಗ ಪಡೆದುಕೊಳ್ಳಿ ಎಂದರು.

ಕಾರ್ಯಾಗಾರದಲ್ಲಿ ಕಂದಾಯ ಇಲಾಖೆ ಹಾಗೂ ಪೋಲೀಸ್ ಇಲಾಖೆಗಳಲ್ಲಿ ಭೂಮಿ ಮತ್ತು ಕಟ್ಟಡಗಳಿಗೆ ಸಂಬಂಧಪಟ್ಟಂತೆ ಇರುವ ವಿವಾದಗಳಲ್ಲಿ ಅನುಸರಿಸಬೇಕಾದ ಮಾರ್ಗದರ್ಶಿ ಕುರಿತು ಪ್ರಶ್ನೋತ್ತರ ಸಂವಾದ ನಡೆಸಲಾಯಿತು.
ಇದೇ ಸಂದರ್ಭದಲ್ಲಿ ಉಪವಿಭಾಗಾಧಿಕಾರಿಗಳಾದ ಮಮತ ಹೊಸಗೌಡರ್, ಹುಲ್ಲುಮನಿ ತಿಮ್ಮಣ್ಣ, ಡಿವೈಎಸ್‍ಪಿ ನರಸಿಂಹ ತಾಮ್ರಧ್ವಜ, ಅಭಿಯೋಜನಾ ಇಲಾಖೆಯ ಕಲ್ಪನಾ, ನಾಗರಾಜ್, ಕೆಂಚಪ್ಪ, ನಿವೃತ್ತ ಅಭಿಯೋಜಕರಾದ ಎಸ್. ವಿ ಪಾಟೀಲ್, ಪೋ,ಲೀಸ್ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳು ಇತರರು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version