ನೆಲದನಿ
ನುಡಿಯ ಒಡಲು | ಭಾಷಿಕ ಕ್ರಿಯೆ ಮತ್ತು ಮನುಷ್ಯ ಘನತೆ
- ಮೇಟಿ ಮಲ್ಲಿಕಾರ್ಜುನ, ಸಹ ಪ್ರಾಧ್ಯಾಪಕ, ಭಾಷಾಶಾಸ್ತ್ರ ವಿಭಾಗ, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಮನುಷ್ಯ ಘನತೆ ಎಂಬೀ ಪರಿಕಲ್ಪನೆಯು ಹಲವು ಭಾಷಿಕ ಕ್ರಿಯೆಗಳನ್ನು ಸೂಚಿಸುತ್ತದೆ. ಇದು ಗ್ರಹಿಕೆಯ ಹಲವು ಸಾಧ್ಯತೆಗಳನ್ನು ಏಕಕಾಲಕ್ಕೆ ಪ್ರಚುರಪಡಿಸುತ್ತದೆ. ವಿವಿಧ ಸಂದರ್ಭಗಳಲ್ಲಿ ವಿಭಿನ್ನ ಮತ್ತು ವೈವಿಧ್ಯಮಯ ಅರ್ಥಗಳನ್ನು ಇದು ಕಂಡರಿಸುತ್ತದೆ. ವಿಟ್ಗೆನ್ಸ್ಟೈನ್ ತನ್ನ ಫಿಲಾಸಫಿಕಲ್ ಇನ್ವೆಸ್ಟಿಗೇಷನ್ನಲ್ಲಿ ಚರ್ಚಿಸಿದಂತೆ, ಒಂದು ಪದ ಅಥವಾ ಪರಿಕಲ್ಪನೆಯ ಅರ್ಥವನ್ನು ಅರ್ಥಮಾಡಿಕೊಳ್ಳಲು ‘ಆವೊಂದು ಪದವು ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ತನ್ನಷ್ಟಕ್ಕೆ ಗ್ರಹಿಸಲು ಸಾಧ್ಯವಿಲ್ಲ.ಅಂದರೆ ಒಂದೊಂದು ಪದವು ಆಯಾ ಭಾಷಿಕ ಸಮುದಾಯದಲ್ಲಿ ಹೇಗೆ ಬಳಕೆಯಾಗುತ್ತದೆ ಮತ್ತು ಸಾಂದರ್ಭಿಕವಾಗಿ ಅರ್ಥಗಳು ಹೇಗೆ ವಿಕಾಸಗೊಳ್ಳುತ್ತವೆ ಎಂಬುದನ್ನು ಅನುಸರಿಸುವುದು ಅವಶ್ಯ ಎಂದು ಹೇಳುತ್ತಾನೆ’. ಪ್ರತಿಯೊಬ್ಬ ಭಾಷಿಕನ ಪದ, ಧ್ವನಿಗಳ ಉಚ್ಚಾರಣೆ, ಮಾತಿನ ವರಸೆಗಳಲ್ಲಿ ಉಂಟಾಗುವ ವ್ಯತ್ಯಾಸಗಳು, ಅವುಗಳಿಗೆ ಅರ್ಥಗಳನ್ನು ರೂಪಿಸುವಲ್ಲಿ ಇಷ್ಟೊಂದು ಪ್ರಮಾಣದಲ್ಲಿ ವ್ಯತ್ಯಾಸಗಳು ಉಂಟಾಗುವುದಿಲ್ಲ. ಹಾಗಾಗಿ ಒಬ್ಬ ವ್ಯಕ್ತಿಯ ಭಾಷಿಕ ಸನ್ನಿವೇಶ ಮತ್ತು ಅದರ ಬಳಕೆಯನ್ನು ನೋಡಿ ಇದರಿಂದ ಮತ್ತೊಬ್ಬ ವ್ಯಕ್ತಿಯು ಕಲಿಯಬೇಕು ಎಂಬ ಅಭಿಮತವು ಇಲ್ಲಿ ವ್ಯಕ್ತವಾಗುತ್ತದೆ.
ಈ ವಾದವು ಕೇವಲ ಅರ್ಥ ವಿಕಾಸಗೊಳ್ಳುವ ಬಗೆಗೆ ಮತ್ತು ಅದರ ವ್ಯಾಪ್ತಿಗೆ ಮಾತ್ರ ಸಂಬಂಧಿಸಿದೆ ಹೊರತು ಇಡಿಯಾಗಿ ಭಾಷೆಯ ಕಲಿಕೆ ಮತ್ತು ಗ್ರಹಿಕೆಯ ನೆಲೆಗಳಲ್ಲಿ ಈ ‘ಅರ್ಥ’ ಎನ್ನುವ ಪರಿಕಲ್ಪನೆ ಭಿನ್ನವಾಗಿರುತ್ತದೆ ಎನ್ನುವುದು ಗಮನಾರ್ಹ. ಇರಲಿ ‘ಈ ಟಿಪ್ಪಣಿಯಲ್ಲಿ ವಿಟ್ಗೆನ್ಸ್ಟೈನಿಯನ್ ವಿಧಾನವನ್ನು ಅನ್ವಯಿಸುವ ಮೂಲಕ, ಮನುಷ್ಯ ಘನತೆ ಎನ್ನುವ ಈ ಪರಿಕಲ್ಪನೆಯು ಹೇಗೆ ವಿಭಿನ್ನ ಅರ್ಥಗಳನ್ನು ಹೊಂದಿರುತ್ತದೆ ಹಾಗೂ ಆ ವಿಭಿನ್ನ ಭಾಷಿಕ ನೆಲೆಗಳನ್ನು ಮನಗಾಣಲು ಮತ್ತು ಪರಿಕಲ್ಪಿಸಲು ಹೇಗೆ ಸಾಧ್ಯ ಎನ್ನುವುದನ್ನು ಬಿಡಿಸಿನೋಡುವ ಪ್ರಯತ್ನವನ್ನು ಮಾಡಲಾಗುತ್ತದೆ.
ಈ ಮೇಲೆ ಹೇಳಿದ ಮಾತುಗಳು ಕೆಲವೊಮ್ಮೆ ವಿರೋಧಾಭಾಸವಾಗಿ ಕಾಣಬಹುದು. ಆದರೆ ಭಾಷಾತತ್ವಶಾಸ್ತ್ರೀಯ ಹಿನ್ನಲೆಯಲ್ಲಿ ಈ ಕುರಿತು, ಘನತೆಯ ಜಿಜ್ಞಾಸೆಯನ್ನು ಸಾಮಾಜಿಕ ವಿವೇಕದ ನೆಲೆಯನ್ನಾಗಿ ಪರಿಭಾವಿಸುವ ಜರೂರು ಏನೆಂಬುದು ಇಲ್ಲಿ ಮಹತ್ವದ ನಿಲುವು ಆಗುತ್ತದೆ.
ಆದ್ದರಿಂದ ಮನುಷ್ಯ ಘನತೆಯ ವಿನ್ಯಾಸಕ್ಕೆ ಸಂಬಂಧಿಸಿದ ಬಿಕ್ಕಟ್ಟುಗಳು ನಮಗೇಕೆ ಮುಖ್ಯವಾಗುತ್ತವೆ ಅಂದರೆ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ರಾಜಕೀಯ ಸ್ವಾಯತ್ತತೆ, ಅಭಿವ್ಯಕ್ತಿ ಸ್ವಾತಂತ್ರ್ಯ, ಅಸ್ಮಿತೆಯ ಹಕ್ಕುಗಳು ಹಾಗೂ ಸಂಪನ್ಮೂಲಗಳಲ್ಲಿ ಪಾಲುದಾರಿಕೆ, ಜ್ಞಾನ ಪ್ರಸಾರಣ ಹಾಗೂ ಜ್ಞಾನ ಉತ್ಪಾದನೆ ಮೊದಲಾದವು ಈ ಘನತೆ ಎಂಬ ವಿದ್ಯಮಾನಕ್ಕೆ ಸಂಬಂಧಿಸಿರುತ್ತವೆ.
ಯಾವುದೇ ಒಂದು ಪದದ ಸಂದರ್ಭವನ್ನು ಬದಲಾಯಿಸುವುದರಿಂದ ಅದು ತನ್ನ ಅರ್ಥದ ಆಯಾಮವನ್ನು ಬದಲಿಸುತ್ತದೆ. ಇದು ಬಹುತೇಕ ಸನ್ನಿವೇಶದಲ್ಲಿ ತಪ್ಪು ತಿಳಿವಳಿಕೆಯನ್ನು ಉಂಟುಮಾಡುವುದು ದಿಟ. ಆದರೆ ಈ ಬದಲಾವಣೆ ಆಯಾ ವ್ಯಕ್ತಿ ಇಲ್ಲವೇ ಸಮುದಾಯದ ಆಶೋತ್ತರಗಳನ್ನು ಎತ್ತಿಹಿಡಿಯುವುದಕ್ಕೆ ಒತ್ತಾಸೆಯಾಗಿರುವುದಿಲ್ಲ. ಬದಲಾಗಿ ಸಾಮಾಜಿಕ ಕಳಂಕವನ್ನು ಆರೋಪಿಸುವ, ಕೀಳರಿಮೆಯನ್ನು ಮೂಡಿಸುವ ಹಾಗೂ ಆತ್ಮಬಲಬನ್ನು ಕುಗ್ಗಿಸುವ ಹುನ್ನಾರವನ್ನೂ ಪ್ರಚೋದಿಸುತ್ತವೆ.
ಆದ್ದರಿಂದ ಭಾಷಿಕ ಬಳಕೆಯ ಬಗೆಗಳು ನಿರ್ದಿಷ್ಟ ಉದ್ದೇಶಕ್ಕೆ ಪೂರಕವಾಗಿಯೇ ನೆಲೆಗೊಳ್ಳುತ್ತವೆ ಎಂದು ಹೇಳುವುದು ದುಸ್ತರ. ಅರ್ಥಗಳನ್ನು ಹೇಗೆ ಪ್ರಚುರಪಡಿಸಲಾಗುತ್ತದೆ ಎನ್ನುವುದೇ ಭಾಷಾತತ್ವಶಾಸ್ತ್ರೀಯ ಬಹುಮುಖ್ಯ ಬಿಕ್ಕಟ್ಟಾಗಿರುತ್ತದೆ. ವಸ್ತುಸ್ಥಿತಿ, ಸತ್ಯ, ಸುಳ್ಳು, ವಾಸ್ತವ, ಆರೋಪ, ಪ್ರತ್ಯಾರೋಪ, ಮುಖಸ್ತುತಿ, ಮುಖಹೀನತೆ ಇತ್ಯಾದಿ ವಿಭಿನ್ನ ಭಾಷಿಕ ಕ್ರಿಯೆಗಳು ನೆಲೆಗೊಳ್ಳುವುದು ಕೇವಲ ಸಾಮಾಜಿಕ ರಚನೆ ಇಲ್ಲವೇ ಕಟ್ಟೋಣಗಳಾಗಿ ಮಾತ್ರ. ಸೂಚಕ ಹಾಗೂ ಸೂಚಿತಗಳ ನಡುವಣ ಸಂಘರ್ಷವನ್ನು ತಾತ್ವಿಕವಾಗಿ ವಿಶ್ಲೇಷಿಸಲು ಸಾಧ್ಯವಿಲ್ಲದ ಸನ್ನಿವೇಶದಲ್ಲಿ, ಆಯಾ ಸನ್ನಿವೇಶಕ್ಕೆ ತೋಚಿದಂತೆ ವ್ಯಾಖ್ಯಾನಿಸಲಾಗುವುದು.
ಇವತ್ತಿನ ಸಾಮಾಜಿಕ, ಸಾಂಸ್ಕೃತಿಕ, ರಾಜಕೀಯ ನಿರೂಪಣೆಗಳನ್ನು ವ್ಯಾಖ್ಯಾನಿಸುವ ಮಹನೀಯರು ಬಹುತೇಕವಾಗಿ ತಮ್ಮ ಮೂಗಿನ ನೇರಕ್ಕೆ ನಿರ್ದಿಷ್ಟಗೊಳಿಸಿ ಅರ್ಥೈಸುತ್ತಾರೆ. ಅದನ್ನೇ ವಸ್ತುನಿಷ್ಠವೆಂದೋ, ತಾತ್ವಿಕವೆಂದೋ ಇಲ್ಲವೇ ಸಾಮಾಜಮುಖಿಯೆಂದೋ ಬಿಂಬಿಸಿ, ತಮ್ಮೀ ನಿಲುವುಗಳಿಗೆ ಸಮ್ಮತಿಸದವರನ್ನು ಅಪಹಾಸ್ಯ ಮಾಡುವ ಹಾಗೂ ಅವರು ನಂಬಿದ ತತ್ವಗಳನ್ನೇ ಅನೈತಿಕಗೊಳಿಸುವ ದಾರ್ಷ್ಟ್ಯತನವನ್ನು ತೋರಿಸುತ್ತಾರೆ. ಸಮುದಾಯದ ಪರವಾಗಿರುವುದೆಂದರೆ, ತಮ್ಮದೇ ನಿಲುವುಗಳನ್ನು ತಾವೇ ಮಾನ್ಯಮಾಡಿಕೊಂಡು, ಇತರರು ನಂಬಿದ ಮೌಲ್ಯಗಳನ್ನು ಅಪಮೌಲ್ಯಗೊಳಿಸುವುದಲ್ಲ.
ಬದಲಾಗಿ ಯಾವುದು ಸಮಾಜಕ್ಕೆ ಒಳಿತನ್ನು ಬಯಸುವ ವಿನ್ಯಾಸವಾಗಿದೆ ಅನ್ನುವುದನ್ನು ಬಿಡಿಸಿ ಹೇಳುವ ವಿಧಾನವಾಗಿರುತ್ತದೆ. ಹಾಗೂ ಈ ವಿದ್ಯಮಾನದ ನೆಲೆಗಳನ್ನು ಪುಷ್ಟಿಕರಿಸುವ ಪ್ರತಿಯೊಬ್ಬರೂ ತಮ್ಮ ವೈಯಕ್ತಿಕ ಭಿನ್ನತೆಗಳನ್ನೂ ಮೀರಿ ಪರಸ್ಪರ ಸಹಮತವನ್ನು ಹೊಂದಿರಬೇಕಾಗುತ್ತದೆ. ಇಂತಹ ಒಂದೊಂದು ಚಿಂತನೆಗೆ ಘನತೆಯು ಸಿಗಬೇಕೆಂದರೆ, ಸಾಮಾಜಿಕ, ಸಾಂಸ್ಕೃತಿಕ ಸಹಭಾಗಿತ್ವದ ಅವಶ್ಯಕತೆ ಇರುತ್ತದೆ. ಏಕೆಂದರೆ ಭಾರತದಂತಹ ದೇಶಗಳು ಏಕಕಾಲದಲ್ಲಿಯೇ ಹಲವು ಕಾಲಗಳಲ್ಲಿ ಬದುಕಿರುತ್ತಾರೆ.
ಇವರ ಲೋಕಗ್ರಹಿಕೆ, ಬದುಕಿನ ಮುನ್ನೋಟಗಳು ಮತ್ತು ಸಮಸಮಾಜ ಕಟ್ಟುವ ಯೋಚನಾಲಹರಿ ಒಂದೇ ಆಗಿರುವುದಿಲ್ಲ. ಹಾಗಾಗಿಯೇ ಕುವೆಂಪು, ಬೇಂದ್ರೆ, ಮಾಸ್ತಿ, ಪುತಿನ ಮೊದಲಾದವರು ಒಂದು ತಲೆಮಾರಿನ ಸಂವೇದನೆಯೊಳಗಿನ ಬಹುತ್ವವನ್ನು ನಿರೂಪಿಸಿದರೆ, ಲಂಕೇಶ್, ತೇಜಸ್ವಿ ಹಾಗೂ ಅನಂತಮೂರ್ತಿ ಇವರೆಲ್ಲರೂ ಸಮಕಾಲೀನವಾಗಿದ್ದರೂ, ಅವರ ಲೋಕಗ್ರಹಿಕೆ ಮತ್ತು ಸಾಮಾಜಿಕ ಭಾಷಾಶಾಸ್ತ್ರೀಯ ನಿಲುವುಗಳು ಪರಸ್ಪರ ಭಿನ್ನವಾಗಿವೆ. ಇವುಗಳನ್ನು ದೇವನೂರ ಅಥವಾ ಸಿದ್ದಲಿಂಗಯ್ಯ ಅವರುಗಳಿಗೆ ಮುಖಾಮುಖಿ ಮಾಡಿ, ಮೌಲ್ಯನಿರ್ಣಯಗಳನ್ನು ಕೈಗೊಂಡರೆ, ಏನೆಲ್ಲ ಅಪಚಾರಗಳು ಘಟಿಸಬಹುದು.
ವಚನಕಾರರ ಗ್ರಹಿಕೆಗಳನ್ನು ಪರಿಶೀಲಿಸಿದರೆ ಭಾರತದ ಸಮುದಾಯಗಳ ಬಹುಳತೆಯ ವಿನ್ಯಾಸಗಳು ನಮಗೆ ಮನನವಾಗುತ್ತವೆ. ಇದೇ ಬಗೆಯ ವಿಭಿನ್ನ ನಿಲುವುಗಳನ್ನು ವೈದೇಹಿ, ಗೀತಾ ನಾಗಭೂಷಣ, ನಾಗವೇಣಿ ಅವರ ಸಾಹಿತ್ಯಕ ನಿರೂಪಣೆಗಳಲ್ಲಿ ಕಾಣಬಹುದು. ಘನತೆಯ ಪ್ರಶ್ನೆಯಿರುವುದು ಈ ವೈವಿಧ್ಯತೆಗಳನ್ನು ಮಾನ್ಯಮಾಡುವ ರಾಜಕಾರಣದ ಪರಿಣಾಮಗಳ ಆಧಾರದ ಮೇಲೆ ಇತ್ಯರ್ಥವಾಗುತ್ತದೆ.
ಚರ್ಚೆ, ಸಂವಾದ, ದಿನನಿತ್ಯದ ಮಾತುಕತೆ ಹಾಗೂ ಅಭಿಪ್ರಾಯಗಳ ಮಂಡನೆಯಲ್ಲಿ ಪ್ರಯೋಗಿಸುವ ಭಾಷಿಕ ಸಂಗತಿಗಳು ನಮ್ಮನ್ನು ಗೊಂದಲಕ್ಕೀಡುಮಾಡುತ್ತವೆ. ಇದಕ್ಕೆ ಬಹುಮುಖ್ಯ ಕಾರಣವೇ ಪದ ಬಳಕೆಯ ನೆಲೆಗಳು. ಅಂದರೆ ನಾವು ನೇರವಾಗಿ ಮಾತನಾಡುವಾಗ ಅಥವಾ ಭೇಟಿಯಾದಾಗ ಅವುಗಳ ಅರ್ಥ ಸಾಧ್ಯತೆಗಳು ಏಕರೂಪವಾಗಿ ಕಾಣಿಸಿಕೊಳ್ಳುವುದು ಸಹಜ. ಆದರೆ ಈ ಸಹಜತೆಯನ್ನು ಗ್ರಹಿಕೆಯ ಸಾಧ್ಯತೆಯನ್ನಾಗಿ ತಿಳಿಯಲು ಆಗುವುದಿಲ್ಲ. ಏಕೆಂದರೆ, ಅರ್ಥದ ನೆಲೆಗಳು ಮಾತ್ರ ಏಕರೂಪಿಯಾಗಿರುವುದಿಲ್ಲ. ಜೊತೆಗೆ ಅವುಗಳನ್ನು ಗ್ರಹಿಸುವ ವಿಧಾನಗಳು ಕೂಡ ಇದಕ್ಕೆ ಒತ್ತಾಸೆಯಾಗುತ್ತವೆ.
ಒಂದು ಪದದ ಅರ್ಥ ನಿಶ್ಚಿತವಾಗಿರುವುದಿಲ್ಲ ಎಂದರೆ ಆ ಪದದ ಮೂಲಕ ಸಾಧಿತವಾಗುವ ಅರ್ಥವೂ ನಿಶ್ಚಿತವಾಗಿರುವುದಿಲ್ಲ. ಆಯಾ ಸನ್ನಿವೇಶಗಳ ಆಧಾರದ ಮೇಲೆ ಇವುಗಳ ಅರ್ಥ ಸಾಧ್ಯತೆಗಳು ಮೈದಾಳುತ್ತವೆ. ಸೂಚಕ (ಸಿಗ್ನಿಫೈರ್) ಮತ್ತು ಸೂಚಿತಗಳ (ಸಿಗ್ನಿಫೈಯ್ಡ್) ನಡುವಣ ನಂಟಸ್ತಿಕೆ ನೇರವಾಗಿರುವುದಿಲ್ಲ. ಅದು ನಿರಂತರವಾಗಿ ವಿಕಾಸಶೀಲವಾಗಿರುತ್ತದೆ. ಇದೊಂದು ಬಗೆಯಲ್ಲಿ ಅನಂತಲೀಲೆ. ಬರಹದ ಸನ್ನಿವೇಶದಲ್ಲಿ ಅರ್ಥದ ಅನಿಶ್ಚಿತತೆ ಇನ್ನೂ ವ್ಯಾಪಕವಾಗಿರುತ್ತದೆ. ಹಾಗಾಗಿ ಬರಹದ ನಿರೂಪಣೆಗಳಲ್ಲಿ ಸನ್ನಿವೇಶಗಳನ್ನು ನಿರ್ಧರಿಸುವ ಮೂಲಕ ಅರ್ಥಗಳನ್ನು ನಿಶ್ಚಯಿಸಲಾಗುತ್ತದೆ.
ಬರಹದಲ್ಲಿ ಮೈದಾಳಿದ ನಿರೂಪಣೆಗಳು ಅತ್ಯಂತ ಸಂದಿಗ್ದವೂ ಹಾಗೂ ಅಸ್ಪಷ್ಟವೂ ಆಗಿರುತ್ತವೆ. ಈ ಬಿಕ್ಕಟ್ಟಿನಲ್ಲಿ ಸೂಕ್ತ ಅರ್ಥಗಳು ಮೈದಾಳದೇ ಹೋದರೆ ಅಪಚಾರ ಮತ್ತು ಅಪಾಯಗಳೂ ತಲೆಯೆತ್ತುತ್ತವೆ. ಅರ್ಥಗಳ ಏಕರೂಪಿತನವೇ ಇಂತಹ ಸಾಮಾಜಿಕ ಅಪಚಾರ ಹಾಗೂ ಸಾಂಸ್ಕೃತಿಕ ಅಪಾಯಕ್ಕೆ ದಾರಿ ಮಾಡಿಕೊಡುತ್ತವೆ ಎಂದು ಸುಲಭವಾಗಿ ಹೇಳಬಹುದು ಆದರೆ ಇದು ವಾಸ್ತವವಲ್ಲ. ಈ ಅರ್ಥಗಳನ್ನು ರೂಪಿಸುವ ಸಾಮಾಜಿಕ ಹೊಣೆಗಾರಿಕೆ ಯಾರಿಗೂ ಸೇರದಿದ್ದರೂ, ಅದನ್ನು ತಮ್ಮ ಕೈವಸಮಾಡಿಕೊಳ್ಳುವ ಹಿತಾಸಕ್ತಿ ಕೆಲವು ವರ್ಗ, ಜಾತಿ ಹಾಗೂ ಧರ್ಮದವರಿಗೆ ಇರುತ್ತದೆ.
ಅರ್ಥದ ವಿಭಿನ್ನತೆ ಭಾಷೆಯಲ್ಲಿ ನೆಲೆನಿಂತಿರುವುದಿಲ್ಲ. ಅದು ಆಯಾ ಭಾಷೆಯ ಜನರ ಗ್ರಹಿಕೆಯಲ್ಲಿ ಅಂತಸ್ಥವಾಗಿರುತ್ತದೆ. ಯಾವ ನುಡಿ ಸಮುದಾಯವೂ ಈ ಗ್ರಹಿಕೆಯನ್ನು ಪ್ರಜಾಸತ್ತಾತ್ಮಕಗೊಳಿಸುವ ತುಡಿತವನ್ನು ಹೊಂದಿರಲಾವು. ಸಾಮಾಜಿಕ ಮತ್ತು ರಾಜಕಿಯ ಪ್ರಾಬಲ್ಯ ಹೊಂದಿದ ಜಾತಿ ವರ್ಗಗಳು, ಈ ಅರ್ಥೈಸುವಿಕೆಯನ್ನು ನಿಯಂತ್ರಿಸುತ್ತವೆ. ಈ ವಾಸ್ತವವನ್ನು ಅರಿಯದ ಹಿಪೋಕ್ರ್ಯಾಟ್ ಚಿಂತಕರೂ, ಇದೇ ಟ್ರ್ಯಾಪ್ನಿಲ್ಲಿ ಬಿದ್ದುಕೊಂಡು, ಯಾರ ಪರವಾಗಿರಬೇಕಿತ್ತೋ, ಅವರನ್ನೇ ಅಪಮಾನಿಸುವ ಹುನ್ನಾರದಲ್ಲಿ ಭಾಗಿಯಾಗುತ್ತಾರೆ. ಯಾವುದು ಮನುಷ್ಯ ಘನತೆಯನ್ನು ಎತ್ತಿಹಿಡಿಯುವ ಸಾಧನವಾಗಬೇಕಿತ್ತೋ, ಅದನ್ನೇ ತಮ್ಮ ಕೀಳಭಿರುಚಿಗೆ ಬಳಸಿಕೊಂಡು, ಸಮುದಾಯಗಳ ಹಿತವನ್ನು ನಿರ್ಲಕ್ಷಿಸಿ, ತಮ್ಮ ಹಿರಿಮೆಯನ್ನು ಮೆರೆಯುತ್ತಾರೆ.
ಸಾಹಿತ್ಯ ಪಠ್ಯಗಳ ವಿಶ್ಲೇಷಣೆಯನ್ನೇ, ಸಾಮಾಜಿಕ ವಿಜ್ಞಾನಗಳ ಸನ್ನಿವೇಶದಲ್ಲಿ ಅನುಸರಿಸಲು ಸಾಧ್ಯವಿಲ್ಲ. ಅಥವಾ ಸಾಮಾಜಿಕ ವಿಜ್ಞಾನಗಳ ವಿಶ್ಲೇಷಣಾ ಪರಿಕರಗಳನ್ನು ನೇರವಾಗಿ ಸಾಹಿತ್ಯಕ್ಕೆ ಒಗ್ಗಿಸಿಕೊಂಡು, ಸಾಹಿತ್ಯವನ್ನು ಅರಿಯುವುದು ಸೂಕ್ತವಲ್ಲ. ಕಾರಣವಿಷ್ಟೆ, ಅರ್ಥದ ವ್ಯಾಪ್ತಿ ಮತ್ತು ಆಯಾಮಗಳು ಆಯಾ ತಿಳಿವಿನ ವಲಯಗಳಿಗೆ ತಕ್ಕಂತೆ ಭಿನ್ನವಾಗಿರುತ್ತವೆ. ಈ ಭಿನ್ನತೆಯೇ ಘನತೆಯ ವೈಶಿಷ್ಟ್ಯವಾಗಿದೆ. ಭಿನ್ನತೆಯೆಂಬುದು ಮೇಲು-ಕೀಳುಗಳನ್ನು ತೀರ್ಮಾನಿಸುವ ಬಗೆಯಲ್ಲ.
ಹಾಗೂ ಬೈನರಿ ಇಲ್ಲವೇ ಡೈಕಾಟಮಿಗಳನ್ನು ರೂಪಿಸುವ ತಂತ್ರವೂ ಅಲ್ಲ. ಇದುವೇ ವ್ಯಕ್ತಿ, ಸಮೂಹ ಹಾಗೂ ದೇಶಗಳ ಘನತೆಯನ್ನು ಅರಿಯುವ ಕ್ರಮವಾಗಿದೆ. ಯಾವುದೇ ವ್ಯಕ್ತಿಯ ಇಲ್ಲವೇ ಸಮೂಹದ ಘನತೆಯನ್ನು ಕೇವಲ ಸಾಪೇಕ್ಷಿತವಾಗಿ ತೀರ್ಮಾನಿಸಿದರೆ, ಘನತೆಯೆಂಬ ವಿದ್ಯಮಾನವೇ ನಗೆಪಾಟಲಿಗೆ ಈಡಾಗುತ್ತದೆ. ಉದಾಹರಣೆಗೆ ಒಡಲಾಳದಲ್ಲಿ ಬರುವ ಕಡಲೆಕಾಯಿ ಪ್ರಸಂಗ, ಕುಸಮಬಾಲೆಯ ಎಳೆನೀರಿನ ಪ್ರಸಂಗವನ್ನು ಸರಳರೇಖಾತ್ಮಕ ಗ್ರಹಿಕೆಯಲ್ಲಿ ವಿಶ್ಲೇಷಿಸಿದರೆ, ಆ ಪಾತ್ರಗಳು ಕೇವಲ ಅನೈತಿಕತೆಯ ರೂಪಕವಾಗಿ ಕಾಣುತ್ತವೆ.
ಈ ಎರಡೂ ಪ್ರಸಂಗಗಳ ಹಿಂದಿನ ಸಾಮಾಜಿಕ, ರಾಜಕೀಯ ಹುನ್ನಾರಗಳು ಏನೆಂದು ಬಿಡಿಸಿನೋಡದೇ, ಅವುಗಳನ್ನು ಸಮ್ಮತಿಸುವ ಇಲ್ಲವೇ ಅವುಗಳೊಟ್ಟಿಗೆ ಒಂದು ಬಗೆಯ ತಾದ್ಯಾತ್ಮತೆಯನ್ನು ಹೊಂದಲು ಸಾಧ್ಯವಿಲ್ಲ. ಆದರೆ ಸಾಮಾಜಿಕ ವಿಜ್ಞಾನಗಳ ಹಿನ್ನಲೆಯಲ್ಲಿ ಇವೆರಡೂ ಪ್ರಸಂಗಗಳನ್ನು ವಿಶ್ಲೇಷಣೆ ಮಾಡಿದರೆ, ಗ್ರಹಿಕೆಯ ಸಾಧ್ಯತೆಗಳು ಬೇರೆಯಾಗಿರುತ್ತವೆ.
ಸಾಹಿತ್ಯ ಮತ್ತು ಸಮಾಜ ವಿಜ್ಞಾನಗಳ ನಡುವಿನ ಈ ವಿಶ್ಲೇಷಣೆಯ ಶೈಲಿ ಮತ್ತು ಮಾದರಿ ಬದಲಾದ ತಕ್ಷಣ ಮನುಷ್ಯ ಘನತೆಯ ಕಲ್ಪನೆ ಬದಲಾಗುವುದಿಲ್ಲ. ಆದರೆ ಈ ಘನತೆಯನ್ನು ಅರಿಯುವ ಸಾಧ್ಯತೆ ಇನ್ನಷ್ಟು ವಿಸ್ತಾರಗೊಳ್ಳುತ್ತದೆ. ಅಂಬೇಡ್ಕರ್, ಟ್ಯಾಗೋರ್, ಟಾಲ್ಸ್ಟಾಯ್, ಕುವೆಂಪು ಮತ್ತು ಗಾಂಧಿ ಅವರ ಚಿಂತನೆಗಳಲ್ಲಿ ಮೈದಾಳುವ ಮನುಷ್ಯ ಘನತೆಯ ನೆಲೆಗಳು ಹೀಗೆ ಸಾಹಿತ್ಯ, ಸಮಾಜವಿಜ್ಞಾನಗಳ ಸಾಧ್ಯತೆಗಳಿಂದ ಪ್ರಕಟಗೊಂಡಿವೆ.
ತಾತ್ವಿಕವಾಗಿ ಇಲ್ಲವೇ ತತ್ವಶಾಸ್ತ್ರೀಯ ನೆಲೆಯಲ್ಲಿ ಮನುಷ್ಯ ಘನತೆಯನ್ನು ಕುರಿತು ಚರ್ಚಿಸುವಾಗ, ಎರಡು ಬಗೆಯ ಸಮಸ್ಯೆಗಳನ್ನು ಎದುರಿಸುತ್ತೇವೆ. ಮನುಷ್ಯ ಘನತೆಯಂತಹ ಪರಿಕಲ್ಪನೆಗಳು ಸಹಜವಾಗಿ ಅಸ್ಪಷ್ಟವೂ ಹಾಗೂ ಸಂದಿಗ್ದವೂ ಆಗಿರುತ್ತವೆ. ಈ ಅಸ್ಪಷ್ಟ ಮತ್ತು ಸಂದಿಗ್ದತೆ ಇವೆರಡೂ ಭಾಷಿಕ ಕ್ರಿಯೆಯಲ್ಲಿ ನೆಲೆಗೊಳ್ಳುತ್ತವೆ. ಹಾಗಾಗಿ ಘನತೆಯನ್ನು ವ್ಯಾಖ್ಯಾನಿಸುವುದು ಅತ್ಯಂತ ದುಸ್ತರವಾದ ಕೆಲಸವಾಗಿದೆ.
ಯಾವುದನ್ನು ನಿಖರವಾಗಿ ಮತ್ತು ಸ್ಪಷ್ಟವಾಗಿ ಭಾಷೆಯೊಳಗೆ ವ್ಯಾಖ್ಯಾನಿಸಲು ಸಾಧ್ಯವೋ, ಅದು ಬಹುತೇಕವಾಗಿ ನಮ್ಮ ಗ್ರಹಿಕೆ ಮತ್ತು ಸಾಮಾಜಿಕ ಅನುಭವದಲ್ಲಿ ಸಹಜ ನಡೆಯಾಗಿರುತ್ತದೆ. ನಮ್ಮ ಗ್ರಹಿಕೆಗೆ ಎಟುಕದ ಯಾವುದೇ ಕಲ್ಪನೆ, ಪರಿಕಲ್ಪನೆ ಅಥವಾ ಅನುಭವು ಭಾಷೆಯಲ್ಲಿ ಸ್ಪಷ್ಟವಾಗಿಯೂ ಮತ್ತು ನಿಖರವಾಗಿಯೂ ವ್ಯಕ್ತವಾಗಲಾರದು. ಮನುಷ್ಯನ ಘನತೆಯ ಕಲ್ಪನೆ ಯಾಕೇ ಇಷ್ಟೊಂದು ಸಂಕೀರ್ಣವಾಗಿ ತೋರುತ್ತದೆ? ಈ ಸಂಕೀರ್ಣತೆಗೆ ಒತ್ತಾಸೆಯಾಗುವ ಭಾಷಿಕ ಮತ್ತು ಸಾಂಸ್ಕೃತಿಕ ಸವಾಲುಗಳಾವವು? ಎನ್ನುವುದಾದರೆ, ಮನುಷ್ಯ ತನ್ನ ಬದುಕಿನಲ್ಲಿ ರೂಪಿಸಿಕೊಳ್ಳುವ ಅನುಭವ ಮತ್ತು ಗ್ರಹಿಕೆ, ಇವುಗಳ ನಡುವೇ ಸಂಘರ್ಷವೊಂದು ಏರ್ಪಟ್ಟರೆ, ಇವೆರಡೂ ವಿದ್ಯಮಾನಗಳನ್ನು ಪ್ರತಿನಿಧಿಸುವ ಹಾಗೂ ಸಂಕಥನಗೊಳಿಸುವ ವಿನ್ಯಾಸಗಳು ಸ್ಪಷ್ಟವಾಗಿ ನೆಲೆನಿಲ್ಲಲಾರವು.
ಏಕೆಂದರೆ, ಮನುಷ್ಯ ಘನತೆಯನ್ನು ಪರಿಕಲ್ಪಿಸುವ ಹಾಗೂ ವ್ಯಾಖ್ಯಾನಿಸುವ ಭಾಷಿಕ ಕ್ರಿಯೆಗಳು ಮುಖ್ಯವಾಗಿ, ಗ್ರಹಿಕೆ ಮತ್ತು ಅಭಿವ್ಯಕ್ತಿಯ ವಿನ್ಯಾಸಗಳನ್ನು ಹೇಗೆ ಮಾನಸಿಕ ನಕ್ಷೆಯಲ್ಲಿ ಸಾಕಾರಗೊಳಿಸಲಾಗುತ್ತದೆ ಮತ್ತು ಅರ್ಥ ಸಾಧ್ಯತೆಗಳನ್ನು ನೆಲೆಗೊಳಿಸಲಾಗುತ್ತದೆ ಎಂಬ ಮಾನಸಿಕ ಪ್ರಕ್ರಿಯೆಗಳನ್ನು ಆಧರಿಸಿರುತ್ತವೆ. ಭಾಷಿಕ ಕ್ರಿಯೆ ಮತ್ತು ಮಾನಸಿಕ ನಕ್ಷೆಗಳ ನಡುವೆ ಪರಸ್ಪರ ಹೊಂದಾಣಿಕೆ ಏರ್ಪಡದಿದ್ದರೆ, ಸಂವಹನ ಕ್ರಿಯೆ ಸುಲಲಿತವಾಗಿ ನೆರವೇರಲಾರದು.
ಭಾಷೆ ಮತ್ತು ಮನಸ್ಸುಗಳ ನಡುವಿನ ವಿನ್ಯಾಸಗಳು ಹೇಗೆ ವ್ಯವಹರಿಸುತ್ತವೆ ಎನ್ನುವ ತಿಳಿವಳಿಕೆ ದಕ್ಕಿದರೆ ಮಾತ್ರ, ಸಾಮಾಜಿಕ ಸಾಂಗತ್ಯ ಮತ್ತು ನಂಟಸ್ತಿಕೆ ಸುಲಭವಾಗುತ್ತದೆ. ಪದಗಳ ಅರ್ಥದ ವಿನ್ಯಾಸಗಳು ಸೂಪ್ತವಾಗಿ ನಮ್ಮ ಮಾನಸಿಕ ರಚನೆಗಳಾಗಿ ಕಾರ್ಯನಿರ್ವಹಿಸಿದರೂ, ಅವುಗಳು ಅಭಿವ್ಯಕ್ತಿಗೊಳ್ಳುವಾಗೆಲ್ಲ ಕೇವಲ ಮಾನಸಿಕ ಸೂಪ್ತರಚನೆಯ ಭಾಗವಾಗಿ ಮಾತ್ರ ಇರುವುದಿಲ್ಲ. ಬದಲಾಗಿ ನಮ್ಮ ಜಾಗ್ರತ ಪ್ರಜ್ಞೆಯನ್ನು ಪ್ರತಿನಿಧಿಸುವ ಸೂಚಕಗಳಾಗುತ್ತವೆ. ಈ ಸೂಚಕಗಳು ತಮ್ಮೊಳಗೆಯೇ ಸೂಚಿತಗಳನ್ನೂ ಹೊಂದಿರುತ್ತವೆ. ಆದರೆ ರಾಜಕೀಯ ಆಯಾಮಗಳನ್ನು ಬಲವಾಗಿ ನೆಮ್ಮಿರುವ, ಯಾವುದೇ ಪರಿಕಲ್ಪನೆ ಅಥವಾ ಪರಿಭಾಷೆ ಬಹುತೇಕವಾಗಿ ಅಸ್ಪಷ್ಟ ಕಲ್ಪನೆಯಾಗಿರುತ್ತದೆ ಎಂದು ಇಲ್ಲಿ ವಾದಿಸಬಹುದು.
ಮನುಷ್ಯ ಘನತೆಯ ಈ ಪರಿಕಲ್ಪನೆಯು ಕಾನೂನು, ನೈತಿಕ ಮತ್ತು ಸಾಮಾಜಿಕ ಹೊಣೆಗಾರಿಕೆಯ ನೆಲೆಯಾಗಿ ಹೆಚ್ಚು ಹೆಚ್ಚು ಪ್ರಚಲಿತಗೊಳ್ಳುತ್ತದೆ. ತಾತ್ವಿಕ ಸಂಕಥನಗಳಲ್ಲಿ ಘನತೆ ಎನ್ನುವುದು ಒಂದು ಮಂತ್ರದಂತೆ ಕಾಣಿಸುತ್ತದೆ. ಆದರೆ, ಇಂತಹ ಪರಿಕಲ್ಪನೆಯನ್ನು ಸೃಜಿಸುವ ಹಾಗೂ ನೆಲೆಗೊಳಿಸುವ ಭಾಷಿಕ ಕ್ರಿಯೆಗಳು ಎಷ್ಟು ವ್ಯಾಪಕವಾಗಿ ವ್ಯಾಖ್ಯಾನಿಸಲ್ಪಡುತ್ತವೋ ಅಷ್ಟೊಂದು ಸಂಕೀರ್ಣತೆಗೆ ಒಳಗಾಗುತ್ತವೆ.
ಹಾಗಾಗಿ ಅದರ ಅರ್ಥಗಳು ಅಸ್ಪಷ್ಟ ಮತ್ತು ಮಸುಕಾಗಿ ತೋರುತ್ತವೆ. ಈ ಟಿಪ್ಪಣಿಯ ಉದ್ದೇಶವೇನೆಂದರೆ, ಮನುಷ್ಯ ಘನತೆ ಎಂಬೀ ಪರಿಕಲ್ಪನೆಯನ್ನು ಪರಿಭಾವಿಸುವ ವಿಧಾನಗಳು ಹೇಗೆ ಭಾಷೆಯ ನಿರೂಪಣೆಗಳಲ್ಲಿ ವಿಕಾಸಗೊಳ್ಳುತ್ತವೆ ಹಾಗೂ ಅರ್ಥಗಳನ್ನು ಮಾನಸಿಕ ನಕ್ಷೆಯ ಸಾಧ್ಯತೆಗಳನ್ನಾಗಿಸುವ ಬಗೆಗಳಾವವು? ಎಂಬ ತಾತ್ವಿಕ ಚರ್ಚೆಯನ್ನು ಬೆಳೆಸುವುದಾಗಿದೆ. ಪರಿಭಾಷೆ ಮತ್ತು ಅದರ ವ್ಯಾಖ್ಯಾನಕ್ಕೆ ಸಂಬಂಧಿಸಿದಂತೆ, ಘನತೆ ಎನ್ನುವುದು ನೈತಿಕ, ದಾರ್ಶನಿಕ ಮತ್ತು ಸಂವಿಧಾನಾತ್ಮಕ ಗ್ರಹಿಕೆಯಾಗಿದೆ. ವಿಭಿನ್ನ ಭಾಷಾ ಬಳಕೆಯ ವಲಯಗಳಲ್ಲಿ ವಿಭಿನ್ನ ಅರ್ಥಗಳು ಈ ಪರಿಕಲ್ಪನೆಯನ್ನು ಸುತ್ತುವರೆದಿವೆ.
ಇದುವರೆಗೂ ಮಾಡಿದ ವಿಶ್ಲೇಷಣೆಗಳ ಪ್ರಕಾರ ಮನುಷ್ಯ ಘನತೆಯ ಅರ್ಥಗಳನ್ನು ಸಾಮಾಜಿಕ ರಚನೆ ಎಂದು ಹೇಳಬಹುದು. ಇಲ್ಲಿ ಸಾಂಸ್ಕೃತಿಕ ಮತ್ತು ಐತಿಹಾಸಿಕ ಸಂದರ್ಭಗಳು ಪ್ರಧಾನ ಪಾತ್ರವನ್ನು ವಹಿಸುತ್ತವೆ. ವಾಸ್ತವದಲ್ಲಿ ಮನುಷ್ಯ ಘನತೆಗೆ ಯಾವುದೇ “ನಿಜವಾದ” ಅರ್ಥವಿಲ್ಲ. ವಿಭಿನ್ನಸ್ತರಗಳಲ್ಲಿ ಈ ಪರಿಕಲ್ಪನೆಯ ಅರ್ಥವು ನಿರ್ಧಾರವಾಗುತ್ತದೆ. ಆದರೆ ಆಯಾ ಸಾಮಾಜಿಕ ಸ್ತರಗಳಿಗೆ ಅನುಗುಣವಾಗಿ ಈ ವಿಭಿನ್ನತೆಯು ಕೆಲವುಸಲ ಗಹನವಾಗಿ ಮತ್ತೇ ಕೆಲವುಸಲ ಅತ್ಯಂತ ತೆಳುವಾಗಿ ನಮಗೆ ತೋರುತ್ತದೆ.
ಈ ವಿನ್ಯಾಸಗಳು ಸಾಮಾಜಿಕ-ಸಾಂಸ್ಕೃತಿಕವಾಗಿ ನಿರ್ಧರಿಸಲಾಗುತ್ತವೆ. ಕಾನೂನುಬದ್ಧ ಪರಿಭಾಷೆಯಲ್ಲಿ ‘ಘನತೆ’ ಎಂಬೀ ಪದ ಬಳಕೆಯು ಮಾನವಹಕ್ಕು ಮತ್ತು ಕಾನೂನುಗಳ ಚೌಕಟ್ಟನ್ನು ಪಡೆದುಕೊಳ್ಳುತ್ತದೆ. ಇದೊಂದು ಬಗೆಯಲ್ಲಿ ಸಮರ್ಥನೀಯ ನಿಲುವು ಆಗಿರುತ್ತದೆ. ನೈತಿಕ-ತಾತ್ವಿಕ ಪರಿಭಾಷೆಗೆ ಹೋಲಿಸಿ ನೋಡಿದರೆ, ಒಂದು ಕಡೆ ದೃಷ್ಟಿಕೋನಕ್ಕೆ ಸಂಬಂಧಿಸಿದ ನಿಲುವಾಗಿ ಕಾಣುತ್ತದೆ. ಮತ್ತೊಂದಡೆ ಅಪಮಾನಕ್ಕೆ ಸಂಬಂಧಿಸಿದ ವಿನ್ಯಾಸವಾಗಿ ಕಾಣಿಸುತ್ತದೆ. ಏಕೆಂದರೆ ಅಪಮಾನದ ಚರಿತ್ರೆಯನ್ನು ಹೊಂದಿದವರಲ್ಲಿ ಮಾತ್ರ ಘನತೆಯ ಬಯಕೆ ದೊಡ್ಡಾಗಿರುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980234243

ದಿನದ ಸುದ್ದಿ
ತತ್ವಪದಗಳು ಸಾರ್ವಕಾಲಿಕ ಬೆಳಕನಿಧಿ: ಕಾ.ತ.ಚಿಕ್ಕಣ್ಣ
ಸುದ್ದಿದಿನ,ಬೆಂಗಳೂರು:ತತ್ವಪದಗಳು ಎಲ್ಲ ಕಾಲಕ್ಕೂ ಸಲ್ಲುವಂತಹ ಬೆಳಕನ್ನು ನೀಡುವ ಸೃಜನಶೀಲ ಸಂರಚನೆಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಶ್ರೀ ಕಾ.ತ.ಚಿಕ್ಕಣ್ಣ ಅವರು ಅಭಿಪ್ರಾಯಪಟ್ಟರು.
ಬೆಂಗಳೂರಿನ ಕೆ.ನಾರಾಯಣಪುರದ ಕ್ರಿಸ್ತು ಜಯಂತಿ ಡೀಮ್ಡ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗ ಹಾಗೂ ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ: ಸಾಂಸ್ಕೃತಿಕ ಅನುಸಂಧಾನ’ ವಿಷಯ ಕುರಿತಾದ ಒಂದು ದಿನದ ರಾಷ್ಟ್ರೀಯ ವಿಚಾರಸಂಕಿರಣದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ತತ್ವಪದ ಸಾಹಿತ್ಯ ರೂಪುಗೊಂಡಿದ್ದ ಕಾಲವನ್ನು ಕತ್ತಲಯುಗ ಎಂದು ಕರೆದು ವಿಸ್ಮೃತಿಗೆ ತಳ್ಳಲಾಗಿತ್ತು. ಆದರೆ ಆ ಕತ್ತಲೆಯುಗದಲ್ಲಿಯೇ ಜಗತ್ತಿಗೆ ಮಹೋನ್ನತ ಬೆಳಕು ನೀಡುವ ನುಡಿರತ್ನಗಳು ರಚನೆಗೊಂಡಿದ್ದವು. ತತ್ವಪದಕಾರರು ಪರಂಪರೆಯೊಂದಿಗೆ ಸಂವಾದ ನಡೆಸುತ್ತಾ ವರ್ತಮಾನಕ್ಕೆ ಸೂಕ್ತವಾಗಿ ಅನ್ವಯವಾಗುವ ಹಾಗೂ ಭವಿಷ್ಯಕ್ಕೆ ಬೇಕಾದ ಜಾಗೃತಿಯನ್ನು ನೀಡುವ ಮೂಲಕ ಕನ್ನಡ ಸಂಸ್ಕೃತಿಯಲ್ಲಿ ತಮ್ಮದೇ ಆದ ಮೌಲ್ಯಯುತ ಸ್ಥಾನವನ್ನು ಪಡೆದುಕೊಂಡಿವೆ. ಸಮಾಜದಲ್ಲಿರುವ ಜಾತಿಭೇದ, ಲಿಂಗಭೇದ, ವರ್ಣಭೇದ ಮೊದಲಾದ ವಿಷಕಾರಿ ಮನಸ್ಥಿತಿಗೆ ತತ್ವಪದಕಾರರು ತಮ್ಮ ನುಡಿ-ನಡೆಗಳ ಮೂಲಕ ಚಿಕಿತ್ಸೆ ನೀಡುವ ಮೂಲಕ ಬದುಕಿನ ಸತ್ಯ ಮತ್ತು ಸಾರ್ಥಕತೆಯನ್ನು ಸಾಧಿಸಿತೋರಿದ್ದಾರೆ ಎಂದು ತಿಳಿಸಿದರು.
ವಿಶ್ವಾತ್ಮಕವಾದ ಸಂವೇದನೆಯ ತತ್ವಪದ ಸಾಹಿತ್ಯ
ವಿಚಾರಸಂಕಿರಣವನ್ನು ಉದ್ಘಾಟನೆ ಮಾಡಿದ ಕ್ರಿಸ್ತು ಜಯಂತಿ ವಿವಿಯ ಸಂಸೋಧನೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕರಾದ ಫಾ.ಡಾ.ಮರಿಯಾಲಾಲ್ ಜೋಸೆಫ್ ಅವರು, ಕನ್ನಡದ ತತ್ವಪದಗಳು ಜನಸಾಮಾನ್ಯರ ವೇದಗಳಾಗಿವೆ. ಕನ್ನಡ ಸಾಹಿತ್ಯಕ್ಕೆ ಸಂಗೀತಾತ್ಮಕ ಶಾಸ್ತ್ರೀಯ ಸಂರಚನೆಯ ಜೊತೆಗೆ ವಿಶ್ವಾತ್ಮಕವಾದ ಸಂವೇದನೆಯ ಮೂಲಕ ಮಹತ್ತರವಾದ ಕೊಡುಗೆ ನೀಡಿದ್ದು ತತ್ವಪದ ಸಾಹಿತ್ಯ.
ಮಧ್ಯಯುಗೀನ ಕಾಲದ ಭಕ್ತಿಚಳವಳಿಯ ಭಾಗವಾಗಿ ಮೂಡಿಬಂದ ವಚನ ಸಾಹಿತ್ಯ ಹಾಗೂ ಕೀರ್ತನ ಸಾಹಿತ್ಯಗಳು ಕರ್ನಾಟಕದಲ್ಲಿ ಮೂಡಿಸಿದ ಸಾಂಸ್ಕೃತಿಕ ಚೈತನ್ಯಶೀಲತೆಯನ್ನು ನಂತರದಲ್ಲಿ ಮುಂದುವರೆಸುವ ಮೂಲಕ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದದ್ದು ತತ್ವಪದ ಸಾಹಿತ್ಯವಾಗಿದೆ. ಇಂದಿನ ಆವೇಗದ ಆಧುನಿಕ ಜಗತ್ತಿಗೆ ತತ್ವಪದಕಾರರು ನೀಡಿದ ಅರಿವಿನ ಬೆಳಕು ಅತ್ಯಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ನಿಜತ್ವ ಬೆಳಗುವ ದಾರಿದೀಪ ತತ್ವಪದಗಳು-ಪದ್ಮಾಲಯ ನಾಗರಾಜ್: ಪ್ರಧಾನಗೋಷ್ಠಿಯ ಅಧ್ಯಕ್ಷತೆ ವಹಿಸಿ ತತ್ವಪದಗಳ ಸಾಂಸ್ಕೃತಿಕ ಮಹತ್ವ ಕುರಿತು ಮಾತನಾಡಿದ ಅಚಲ ಸಾಧಕರಾದ ಪದ್ಮಾಲಯ ನಾಗರಾಜ್ ಅವರು, ಜಗತ್ತಿನಾದ್ಯಂತ ಇಂದು ನಡೆಯುತ್ತಿರುವ ಅಧಿಕಾರ ಹಾಗೂ ವ್ಯಾಪಾರದಾಹೀ ರಾಜಕೀಯ ಲಂಪಟ, ಆರ್ಥಿಕ ಲಂಪಟ ಹಾಗೂ ಸಾಮಾಜಿಕ ಅಸಮಾನ ಸೃಷ್ಟಿಗಳು ಮಾನವಲೋಕವನ್ನು ಭ್ರಮೆ ಮತ್ತು ಅಸತ್ಯದತ್ತ ಕೊಂಡೊಯ್ಯುತ್ತಿವೆ. ಅವೈಜ್ಞಾನಿಕ ಕಲ್ಪನೆಗಳನ್ನು ಹುಟ್ಟುಹಾಕುತ್ತಾ ವಾಸ್ತವಿಕತೆಯಿಂದ ದೂರಮಾಡುತ್ತಿವೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಿರಂತರ ಆಗುವಿಕೆಯ ಅನಂತವಿಶ್ವದಲ್ಲಿ ನಾವೊಂದು ಬಿಂದುವೆಂಬ ಸತ್ಯದರ್ಶನ ಮಾಡಿಸುವ ಮೂಲಕ ನಿಜತ್ವವನ್ನು ಬೆಳಗುವ ದಾರದೀಪವಾಗಿವೆ ತತ್ವಪದಗಳು ಎಂದು ತಿಳಿಸಿದರು.
‘ತತ್ವಪದಕಾರ್ತಿಯರ ಲೋಕದೃಷ್ಠಿ’ಯನ್ನು ಕುರಿತು ವಿಚಾರಮಂಡನೆ ಮಾಡಿದ ಡಾ.ಶೋಭಾರಾಣಿ ಎನ್. ಅವರು, ‘ತತ್ವಪದಕಾರ್ತಿಯರು ಸಂಸಾರದ ಸಹಯಾನದೊಂದಿಗೇ ಅಧ್ಯಾತ್ಮಿಕ ಸಾಧನೆಯನ್ನು ಮಾಡಬಹುದೆಂದು ಸಾಧಿಸಿತೋರಿದ್ದಾರೆ. ನಿರ್ಭೀತ ನುಡಿಕಾರರು ತತ್ವಪದಕಾರ್ತಿಯರು. ಮಹಿಳಾ ತತ್ವಪದಕಾರರ ಇನ್ನೂ ಎಷ್ಟೋ ತತ್ವಪದಗಳು ಸಂಗ್ರಹವಾಗಬೇಕಿದೆ’ ಎಂದು ಅಭಿಪ್ರಯಪಟ್ಟರು.
‘ಕನ್ನಡ ತತ್ವಪದಗಳು ಮತ್ತು ಬಹುತ್ವ ಭಾರತ’ ಕುರಿತು ಮಾತನಾಡಿದ ರವಿ ಕಂಬಳಿ ಅವರು, ಬಹುಸಂಸ್ಕೃತಿಗಳಿರುವ ಭಾರತದಲ್ಲಿ ಏಕರೂಪೀತನದ ಯಾಜಮಾನ್ಯ ಹೇರುವ ದೌರ್ಜನ್ಯ ಹಾಗೂ ಸಮಸ್ಯೆಗಳಿಗೆ ಪ್ರತಿಕ್ರಿಯೆಯಾಗಿ ಕನ್ನಡ ತತ್ವಪದಕಾರರು ಬಹುತ್ವವನ್ನು ತಮ್ಮ ಸಾಹಿತ್ಯದ ಆಶಯ ಹಾಗೂ ಬದುಕಿನ ಆಚರಣೆಯನ್ನಾಗಿ ಮಾಡಿಕೊಂಡರು. ಮೌಢ್ಯರಹಿತವಾದ ಸಮಸಮಾಜ ಕಲ್ಪನೆ ಅವರದಾಗಿತ್ತು. ತಮಗಿಂತಲೂ ಹಿಂದೆ ಹಲವು ಬಗೆಯ ಬಹುತ್ವದ ಮಾದರಿಗಳನ್ನು ಪ್ರತಿಪಾದಿಸಿದ್ದ ವಚನಕಾರರು ಇವರಿಗೆ ಆದರ್ಶವಾಗಿದ್ದರು ಎಂದು ತಿಳಿಸಿದರು.
ವಿಚಾರಸಂಕಿರಣದ ಭಾಗವಾಗಿ ಹೊರತರಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ
ಸಾಂಸ್ಕೃತಿಕ ಅನುಸಂಧಾನ-ಸಂಪುಟ 1 ಮತ್ತು 2’ ಕೃತಿಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಪ್ರಸಿದ್ಧ ಗಾಯಕರಾದ ಶ್ರೀ ಖಾಸೀಂ ಮಲ್ಲಿಗೆ ಮಡುವು ತತ್ವಪದ ಗಾಯನವನ್ನು ಪ್ರಸ್ತುತಪಡಿಸಿದರು. ಪರ್ಯಾಯಗೋಷ್ಠಿಗಳಲ್ಲಿ 6೦ಕ್ಕೂ ಹೆಚ್ಚು ಸಂಶೋಧಕರು ಪ್ರಬಂಧ ಮಂಡನೆ ಮಾಡಿದರು.
ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಮಾನವಿಕ ವಿಭಾಗದ ಡೀನರಾದ ಡಾ.ಗೋಪಕುಮಾರ್ ಎ.ವಿ. ಅವರು ಮುಖ್ಯ ಅತಿಥಿಯಾಗಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಕ್ಯಾಪ್ಟನ್ ಡಾ.ಸರ್ವೇಶ್ ಬಿ.ಎಸ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿಚಾರಸಂಕಿರಣದ ಸಂಯೋಜಕರಾದ ಡಾ.ಕಿರಣಕುಮಾರ್ ಹೆಚ್.ಜಿ ಅವರು ವಂದಿಸಿದರು.
ಕನ್ನಡ ಪ್ರಾಧ್ಯಾಪಕರಾದ ಡಾ.ಕುಪ್ಪನಹಳ್ಳಿ ಎಂ.ಭೈರಪ್ಪ ಅವರು ನಿರೂಪಿಸಿದರು. ಕನ್ನಡ ಪ್ರಾಧ್ಯಾಪಕರಾದ ಪ್ರೊ.ಚಂದ್ರಶೇಖರ್ ಎನ್., ಡಾ.ಸೈಯದ್ ಮುಯಿನ್, ಡಾ.ರವಿಶಂಕರ್ ಎ.ಕೆ., ತತ್ವಪದಕಾರರ ಅಧ್ಯಯನ ಕೇಂದ್ರದ ಸಿಬ್ಬಂದಿವರ್ಗದವರಾದ ರಜತಾ ಶೆಟ್ಟಿ ಹಾಗೂ ಸುಪ್ರಿಯಾ ಅವರು ಉಪಸ್ಥಿತರಿದ್ದರು. 200ಕ್ಕೂ ಹೆಚ್ಚು ಅಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಭೀಮಾ ಕೋರೆಗಾಂವ ; ಮಹರ್ ಸೈನಿಕರ ವೀರಗಾಥೆ
~ ಡಾ. ಸುಜಾತಾ ಚಲವಾದಿ
ಭಾರತದ ಇತಿಹಾಸದಲ್ಲಿ ಅನೇಕ ಕ್ರೂರ ವ್ಯಂಗ್ಯಗಳಿವೆ. ಅವುಗಳಲ್ಲಿ ಪೇಶ್ವಾಶಾಹಿ ಆಡಳಿತವು ಒಂದು. ಅವರ ಆಡಳಿತ ಸಂದರ್ಭದಲ್ಲಿ ಅಸ್ಪೃಶ್ಯರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವ ಸ್ಥಿತಿಯಿತ್ತು. ಜಾತಿ ವ್ಯವಸ್ಥೆ ವಿಜೃಂಭಿಸುತ್ತಿದ್ದ ಕಾಲವದು.
ದೌರ್ಜನ್ಯ, ಅನ್ಯಾಯಕ್ಕೆ ಒಳಗಾಗಿ ಸದಾ ನೋವಿನ ಬದುಕು ಅಸ್ಪೃಶ್ಯರದ್ದಾಗಿತ್ತು. ಕಿತ್ತುತಿನ್ನುವ ಬಡತನ, ಹಸಿವು, ದಾರಿದ್ರö್ಯ, ಅಶಿಕ್ಷಿತರಾದ ಅಸ್ಪಶ್ಯರು ಅನ್ಯಾಯದ ವಿರುದ್ಧ ಹೋರಾಟ ಮಾಡುವುದು ಕನಸಿನ ಮಾತಾಗಿತ್ತು. ಇವರ ಬಲಹೀನತೆಯನ್ನು ಬಳಸಿಕೊಂಡು ‘ಪ್ರಾಣಿಗಿಂತ ಕೀಳಾಗಿ’ ನಡೆಸಿಕೊಳ್ಳುತ್ತಿದ್ದ ಪೇಶ್ವಾ ಆಡಳಿತವು ಶೂದ್ರರ, ನಿಮ್ನರ ಮೇಲೆ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದ್ದರು.
ಅನ್ಯಾಯಕ್ಕೆ ಒಳಗಾದ ಕೆಳಜಾತಿಯ ಮಹಾರರು, ಮಾಂಗರು, ಚಮ್ಮಾರರು ಮತ್ತು ಮಹಿಳೆಯರು ತತ್ತರಿಸಿ ಹೋಗಿದ್ದರು. ಮಹಾರಾಷ್ಟçದ ಪೇಶ್ವಾಶಾಹಿ ಕಾಲಘಟ್ಟದಲ್ಲಿ ನಡೆದ ಭೀಮಾ ಕೋರೆಗಾಂವ ಚಳವಳಿಯನ್ನು ಬರಹದ ರೂಪದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ನಮ್ಮ ಮುಂದೆ ಇರಿಸಿದ್ದಾರೆ.
1ನೇ ಜನವರಿ 1818ರಲ್ಲಿ ಅಂದರೆ ಇಂದಿಗೆ 207 ವರ್ಷಗಳ ಹಿಂದೆ 28,000 ಸಾವಿರ ಸಂಖ್ಯೆಯ ಪೇಶ್ವಾಸೈನ್ಯದ ಎದುರು ಐದುನೂರು ಮಹಾರ ಜನಾಂಗದವರು ಹೋರಾಡಿ ವಿಜಯ ಸಾಧಿಸಿದ ದಿನ ಕೋರೆಗಾಂವ್ ಯುದ್ಧ ‘ನ್ಯಾಯದ ಯುದ್ಧ’, ಇಡೀ ಪರಿಶಿಷ್ಟ ಜಾತಿಯವರಿಗೆ ಸ್ವಾಭಿಮಾನದ ಸಂಕೇತವಾಗಿ ಪರಿಣಮಿಸಿದೆ.
ಈ ದಿನವನ್ನು ಯಾವ ಮಹಾರರೂ ಮರೆಯುವ ಹಾಗಿಲ್ಲ. ಬಾಬಾಸಾಹೇಬರು ಈ ದಿನದ ಸ್ಮರಣೆಯನ್ನು “ದಲಿತರ ಪರಾಕ್ರಮ ದಿನ”ವೆಂದು ತಿಳಿದು ಕೋರೆಗಾಂವನಲ್ಲಿ ನಿರ್ಮಿಸಿದ ವಿಜಯಸ್ತಂಭ ಸ್ಮಾರಕಕ್ಕೆ ವಂದಿಸಲು ಪ್ರತೀ ವರ್ಷ ಜನವರಿ 1 ರಂದು ತಪ್ಪದೇ ಹೋಗಿ ಬರುತ್ತಿದ್ದರು. ಜಾತಿಪದ್ಧತಿಯೇ ಪ್ರಧಾನವಾದ ಕಾಲದಲ್ಲಿ ಅಸ್ಪಶ್ಯರ ಸ್ಥಿತಿ ತುಂಬಾ ಹದಗೆಟ್ಟು ಹೋಗಿತ್ತು. ಮೇಲು-ಕೀಳು ಎಂಬ ಭಾವನೆ ಏರುಮುಖದಲ್ಲಿದ್ದ ಕಾಲ.
ಮನುಸ್ಮೃತಿಯನ್ನು ಚಾಚೂ ತಪ್ಪದೇ ಮುನ್ನಡೆಸಿಕೊಂಡು ಬರುವ ಮೇಲ್ವರ್ಗದವರು ಅಸ್ಪೃ್ಪಶ್ಯರನ್ನು ಕಂಡರೆ ಅನೇಕ ಬಗೆಯ ಶಿಕ್ಷೆಗೆ ಒಳಗು ಮಾಡುತ್ತಿದ್ದರು. ಅಸ್ಪೃಶ್ಯರನ್ನು ಕಂಡರೆ ಮೈಲಿಗೆಯಾಗುತ್ತದೆ ಎನ್ನುವ ಮನಸ್ಥಿತಿ ಅವರದ್ದು, ಅಸ್ಪೃಶ್ಯ ರಸ್ತೆಗೆ ಇಳಿಯಕೂಡದು, ಒಳ್ಳೆ ಬಟ್ಟೆ ಹಾಕಿಕೊಳ್ಳುವ ಹಾಗಿಲ್ಲ, ಒಳ್ಳೆಯ ಆಹಾರ ಸೇವನೆಯಂತೂ ಕನಸಿನ ಮಾತಾಗಿತ್ತು. ಊರ ಪ್ರವೇಶಕ್ಕೆ ಸಮಯ ನಿಗದಿ ಮಾಡಿದ್ದರು.
ಸೂರ್ಯೋದಯ, ಸೂರ್ಯಾಸ್ತದ ಸಂದರ್ಭದಲ್ಲಿ ಅಸ್ಪೃಶ್ಯ ವ್ಯಕ್ತಿ ಊರಲ್ಲಿ ಬರುವಂತಿರಲಿಲ್ಲ. ಸೂರ್ಯ ನೆತ್ತಿಯ ಮೇಲಿದ್ದಾಗ ಮಾತ್ರ ಊರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೀದಿಯಲ್ಲಿ ಹೋಗಬೇಕಾದರೆ ಕೊರಳಿಗೆ ಮಣ್ಣಿನ ಸಣ್ಣ ಕುಡಿಕೆಯನ್ನು ಹಾಕಿಕೊಂಡು ಹೋಗಬೇಕು, ಉಗುಳುವ ಸಂದರ್ಭ ಬಂದರೆ, ಅದೇ ಕುಡಿಕೆಯಲ್ಲಿಯೇ ಉಗುಳಿಕೊಳ್ಳಬೇಕು. ಕಾರಣ ರಸ್ತೆಯಲ್ಲಿ ಅಸ್ಪೃಶ್ಯರು ಉಗುಳಿದರೆ ಅವನ ಹೇಸಿಗೆಯನ್ನು ಸವರ್ಣೀಯರು ತುಳಿಯಬಾರದು.
ತುಳಿದರೆ ಮೈಲಿಗೆಯಾಗುತ್ತಿತ್ತು. ರಸ್ತೆಯಲ್ಲಿ ನಡೆಯುವಾಗ ಆತನ ನೆರಳು ಅವನ ಕಾಲಲ್ಲಿಯೇ ಉಳಿಯುವ ಹಾಗೇ ಮಧ್ಯಾಹ್ನದ ನೆತ್ತಿ ಸುಡುವ ಬಿಸಿಲಿನಲ್ಲಿ ಮಾತ್ರ ಊರಲ್ಲಿ ಬರಬೇಕು. ನಡೆದುಕೊಂಡು ಹೋಗುವಾಗ ಹೆಜ್ಜೆ ಗುರುತುಗಳು ಕಾಣದಿರಲಿ ಎಂದು ಬೆನ್ನಿಗೆ ಮುಳ್ಳಿನ ಪೊರಕೆಯನ್ನು ಕಟ್ಟಿಕೊಂಡು ಸಾಗಬೇಕಾದ ಸ್ಥಿತಿ ಅವರದಾಗಿತ್ತು. ಹಾಗೇ ಅಸ್ಪೃಶ್ಯನೊಬ್ಬ ಬರುವುದನ್ನು ‘ಸಂಭೋಳಿ ಸಂಭೋಳಿ ಮಾಯ್ ಬಾಪ್ ಹೊಲೆಯ ಬರುತ್ತಿದ್ದೇನೆ’ ಅಂತಾ ಕೂಗಿ ಹೇಳಬೇಕು. ಇಲ್ಲ, ಕೈಯಲ್ಲಿ ಗೆಜ್ಜೆಕಟ್ಟಿದ ಕೋಲನ್ನು ಹಿಡಿದುಕೊಂಡು ನೆಲಕ್ಕೆ ಕುಕ್ಕಿಸಿಕೊಂಡು ಸದ್ದು ಮಾಡುತ್ತ ಹೋಗಬೇಕು.
ಇದಲ್ಲದೆ ಅಸ್ಪೃಶ್ಯ ಊರ ಪ್ರವೇಶ ಮಾಡಿದಾಗ ಯಾರಾದರೂ ಎದುರು ಬಂದರೆ ಸುಡುವ ಬಿಸಿಲಲ್ಲಿ ಓಡಿ ಹೋಗಿ ಭೂಮಿಯನ್ನು ಅಪ್ಪಿಕೊಳ್ಳಬೇಕು. ಸವರ್ಣೀಯರಿಗೆ ಅವನ ನೆರಳೂ ಸ್ಪರ್ಶ ಮಾಡುವಂಗಿರಲಿಲ್ಲ. ಇಂತಹ ಅಮಾನವೀಯ ನಿಯಮಗಳನ್ನು ಹೊರಡಿಸಿದ ಕಾಲಘಟ್ಟವದು. ಇಷ್ಟೆಲ್ಲಾ ನಿಯಮಗಳನ್ನು ಅಸ್ಪಶ್ಯರ ಮೇಲೆ ಹೇರಿದರೂ ಕೂಡಾ ಮಹಾರ್ ಸೈನಿಕರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಮೊಗಲರ ಬೃಹತ್ ಸೈನ್ಯದ ವಿರುದ್ಧ ಹೋರಾಡಿ ಪೇಶ್ವೆಗಳ ಪರವಾಗಿ ಯುದ್ಧಕ್ಕೆ ಸನ್ನದ್ಧರಾಗಿದ್ದರು. ಮಹಾರ್ ಸೈನಿಕರ ಶೌರ್ಯದಿಂದಲೇ ಪೇಶ್ವೆಗಳ ಆಡಳಿತ ಸುಗಮವಾಗಿ ನಡೆಯುತ್ತಿತ್ತು. ಆದರೆ ಪೇಶ್ವಗಳು ಮತ್ತು ಸವರ್ಣೀಯರು ಮಹಾರ್ಸೈನಿಕರನ್ನು ತುಚ್ಛವಾಗಿ ನಡೆಸಿಕೊಳ್ಳುತ್ತಿದ್ದರು.
1758 ರಲ್ಲಿ ಬ್ರಿಟಿಷರು ಈಸ್ಟ್ ಇಂಡಿಯಾ ಕಂಪನಿಯನ್ನು ಸ್ಥಾಪಿಸಿದ ನಂತರ ಮಹಾರ್ ಜನರನ್ನು ಸೈನಿಕರಾಗಿ ನೇಮಕ ಮಾಡಿಕೊಳ್ಳಲು ಪ್ರಾರಂಭಿಸಿದರು. ಭಾರತೀಯ ಮಹಾರ್ ಸೈನಿಕರಿಗೆ ಶಿಕ್ಷಣದ ಅವಕಾಶವನ್ನು ಮಾಡಿಕೊಟ್ಟಿದ್ದರ ಪರಿಣಾಮ ಸ್ವಲ್ಪ ಮಟ್ಟಿಗೆ ತಿಳಿವಳಿಕೆ ಮೂಡಲು ಸಹಾಯವಾಯಿತು. ತಮ್ಮ ಹಕ್ಕು-ಬಾಧ್ಯತೆಗಳನ್ನು ತಿಳಿಯುವಂತಾಯಿತು. ಬ್ರಿಟಿಷರಲ್ಲಿ ಇರದ ಜಾತಿವ್ಯವಸ್ಥೆ ನಮ್ಮ ದೇಶದಲ್ಲಿ ಕಂಡ ಮಹಾರ್ ಸೈನಿಕರು ಬ್ರಿಟಿಷರಿಗೆ ತಮ್ಮ ಬೆಂಬಲವನ್ನು ನೀಡುವಂತಾಯಿತು. ಅವಮಾನ, ಅನ್ಯಾಯ, ದೌರ್ಜನ್ಯಕ್ಕೆ ಒಳಗಾದ ಮಹಾರ್ ಜನಾಂಗದವರು, ಈ ಎಲ್ಲದರಿಂದ ಮುಕ್ತಿ ಕಾಣಲು ಬ್ರಿಟಿಷರ ಪರವಾಗಿ ಯುದ್ಧಗಳಲ್ಲಿ ಹೋರಾಡಲು ಪ್ರಾರಂಭಿಸಿದರು.
ಎರಡನೆಯ ಬಾಜೀರಾವ್ ಪೇಶ್ವೆಯ ರಾಜ್ಯಾಡಳಿತವಿದ್ದ ಸಂದರ್ಭದಲ್ಲಿ 31 ನೇ ಡಿಸೆಂಬರ್ 1817 ರ ರಾತ್ರಿ ಬ್ರಿಟಿಷರ ಸೇನಾಪತಿ ಕ್ಯಾಪ್ಟನ್ ಫ್ರಾನ್ಸಿಸ್ ಸ್ಟಂಡನ್ ಮುಂದಾಳತ್ವದಲ್ಲಿ ಸೇನೆ ಪೇಶ್ವೆಗಳ ಮೇಲೆ ದಾಳಿ ಮಾಡಲು ಸಿದ್ಧಗೊಂಡಿತು. ಇದನ್ನು ತಿಳಿದ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕ ಮಾರುವೇಷದಲ್ಲಿ ಪೇಶ್ವೆಯನ್ನು ಕಾಣುತ್ತಾನೆ. ಆಗ ಪೇಶ್ವೆ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕನನ್ನು ಒಳಗೆ ಬಿಟ್ಟವನನ್ನು ಕೊಲ್ಲಿಸುತ್ತಾನೆ. ಇಂಗ್ಲಿಷರು ನಿಮ್ಮ ಮೇಲೆ ಯುದ್ಧ ಮಾಡುವರಿದ್ದಾರೆ, ನೀವು ನಮ್ಮ ಹಕ್ಕುಗಳನ್ನು ನಮಗೆ ನೀಡುವುದಾದರೆ ನಿಮ್ಮ ಪರವಾಗಿ ಅವರ ವಿರುದ್ಧ ನಾವು ಹೋರಾಡುತ್ತೇವೆ ಎನ್ನುತ್ತಾನೆ. “ನಿಮ್ಮ ಹಕ್ಕುಗಳು ಯಾವವು? ನೀನು ಇನ್ನೊಂದು ಘಳಿಗೆ ಇಲ್ಲಿ ನಿಂತರೆ ನಿನ್ನ ಶಿರಚ್ಛೇದನ ಮಾಡುತ್ತೇನೆ” ಎಂದು ಗದರುತ್ತಾನೆ. ಸಿದ್ಧನಾಕ ಮರಳಿ ಬಂದು ಅಲ್ಲಿ ನಡೆದ ಎಲ್ಲ ವಿವರ ಸಂಗಾತಿಗಳಿಗೆ ನೀಡುತ್ತಾನೆ. ಅಂತಿಮವಾಗಿ ಇಂಗ್ಲಿಷರ ಪರವಾಗಿ ಮಹಾರ್ ಬೆಟಾಲಿಯನ್ ಹೋರಾಡಲು ಸಿದ್ಧವಾಗುತ್ತದೆ. ಪೇಶ್ವೆಗಳ ಸೈನ್ಯ ಕೋರೆಗಾಂವ್ ಪ್ರದೇಶದ ಭೀಮಾನದಿಯ ಬಲದಂಡೆಯ ಮೇಲೆ ಯುದ್ಧಕ್ಕೆ ಸಜ್ಜಾಗಿ ಸುತ್ತುವರೆದು ನಿಂತುಕೊಂಡಿತು. ಮಹಾರ್ ರೆಜಿಮೆಂಟ್ ಸೈನ್ಯ ಬ್ರಿಟಿಷರ ಪರವಾಗಿ ಯುದ್ಧಕ್ಕೆ ಸಜ್ಜಾಗಿದ್ದರು.
ಪೇಶ್ವೆಗಳ ಸೇನೆಯು 25,000 ಕುದುರೆ ಸವಾರರು ಮತ್ತು 3,000 ಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿದ್ದ ಯೋಧರಿಂದ ತುಂಬಿ ತುಳುಕುತ್ತಿತ್ತು. ಎರಡೂ ಸೇನೆಗಳ ನಡುವೆ ಘನಘೋರ ಯುದ್ಧ ಪ್ರಾರಂಭವಾಗುತ್ತದೆ. ಬೃಹತ್ ಸೇನೆಯ ವಿರುದ್ಧ ಬ್ರಿಟಿಷ್ ಸೇನಾಪತಿ ಕ್ಯಾಪ್ಟನ್ ಪ್ರಾನ್ಸಿಸ್ ಸ್ಟಂಡನ್ ತಾನು ಸೋಲುತ್ತೇನೆ ಎಂದುಕೊAಡು ನಿರಾಶೆಯನ್ನು ತಳೆದಿದ್ದ. ಆದರೂ ಎದುರಾಳಿಯ ಜೊತೆ ಯುದ್ಧದಲ್ಲಿ ಮುನ್ನುಗ್ಗುವುದು ಆತನ ವಿಚಾರವಾಗಿತ್ತು. “ಮಹಾರ್ ಸೈನಿಕರು ವೀರಾವೇಶದಿಂದ ಹೋರಾಡಿ ಪೇಶ್ವೆಗಳು ಪಲಾಯನ ಗೈಯ್ಯಲು ಕಾರಣರಾದರು. ಈ ಯುದ್ಧದಲ್ಲಿ ಎರಡನೆಯ ಬಾಜಿರಾವ್ ಪೇಶ್ವೆಯು ಪಲಾಯನ ಮಾಡುವುದರಲ್ಲಿ ಮೊದಲಿಗ”ನೆಂದು ಬಾಬಾಸಾಹೇಬರು ತಮ್ಮ ಬರಹದಲ್ಲಿ ದಾಖಲಿಸಿದ್ದಾರೆ.
ಬೆಳಿಗ್ಗೆ ಆರು ಗಂಟೆಗೆ ಪ್ರಾರಂಭವಾದ ಯುದ್ಧ ರಾತ್ರಿ ಆರು ಗಂಟೆಗೆ ಮುಕ್ತಾಯಗೊಳ್ಳುತ್ತದೆ. ಸಂಖ್ಯೆಯಲ್ಲಿ ಅಲ್ಪವಾಗಿದ್ದರೂ ಅತ್ಯಂತ ಕೆಚ್ಚಿನಿಂದ ಕಲಿತನ ಪ್ರದರ್ಶಿಸಿದ ಮಹಾರ್ ಯೋಧರು, ತಮ್ಮ ಮೇಲೆ ಅಮಾನವೀಯವಾದ ಅಸ್ಪೃಶ್ಯತೆಯನ್ನು ಹೇರಿದ್ದ ಪೇಶ್ವೆ ಆಡಳಿತವನ್ನು ಯುದ್ಧದಲ್ಲಿ ಮಣ್ಣು ಮುಕ್ಕಿಸಿದರು. ಮಹಾರ್ ಸೈನಿಕರ ಅಭೂತಪೂರ್ವ ಕಲಿತನದ ಕಾರಣದಿಂದಲೇ ಬ್ರಿಟಿಷರು ಕೋರೆಗಾಂವ್ ಯುದ್ಧವನ್ನು ಗೆಲ್ಲಲು ಸಾಧ್ಯವಾಯಿತು. ಗೆಲುವಿಗೆ ಕಾರಣರಾದ, ಕದನದಲ್ಲಿ ಹುತಾತ್ಮರಾದ ಯೋಧರನ್ನು ಸದಾಕಾಲ ಸ್ಮರಿಸುವಂತೆ ಕೋರೆಗಾಂವನ ಭೀಮಾನದಿ ತೀರದ ಪ್ರಶಸ್ತವಾದ ಮೈದಾನ, ಕದನದ ಕಿಡಿ ಮೊಟ್ಟ ಮೊದಲು ಹೊತ್ತಿದ ಸ್ಥಳದಲ್ಲಿ ಬ್ರಿಟಿಷರು ಸ್ಮರಣ ಸ್ತಂಭವನ್ನು ಸ್ಥಾಪಿಸಿದರು.
26 ನೆಯ ಮಾರ್ಚ್ 1821 ರಲ್ಲಿ ಈ ಭವ್ಯ ವಿಜಯಸ್ತಂಭಕ್ಕೆ ಅಡಿಗಲ್ಲು ಹಾಕಿದಾಗ ಬಂದೂಕು ಮತ್ತು ತೋಪುಗಳ ಮೂಲಕ ಹುತಾತ್ಮರಿಗೆ ರಾಜಮರ್ಯಾದೆಯ ಶ್ರದ್ಧಾಂಜಲಿ ಸಲ್ಲಿಸಲಾಯಿತು. 63 ಅಡಿ ಎತ್ತರ ಇರುವ ಈ ವಿಜಯಸ್ತಂಭವು 1822 ರಲ್ಲಿ ಪೂರ್ಣವಾಗಿ ನಿರ್ಮಾಣವಾಯಿತು. ಮೊದಲಿಗೆ ಈ ಸ್ತಂಭವನ್ನು ಮಹಾರ್ ಸ್ತಂಭವೆAದು ಕರೆಯಲಾಗುತ್ತಿತ್ತು. ನಂತರದಲ್ಲಿ ವಿಜಯಸ್ತಂಭವೆಂದು ಹೆಸರಿಸಲಾಯಿತು.
ವಿಜಯಸ್ತಂಭದ ಮೇಲೆ 20 ಮಹಾರ್ ಸೈನಿಕರ ಹೆಸರುಗಳನ್ನು ಕೆತ್ತಿಸಲಾಗಿದೆ. ಪ್ರತಿವರ್ಷ ಜನೆವರಿ 1 ರಂದು ಬಾಬಾಸಾಹೇಬರು ಕೋರೆಗಾಂವ್ ವಿಜಯಸ್ತಂಭಕ್ಕೆ ಭೇಟಿ ಕೊಟ್ಟು ನಮನವನ್ನು ಸಲ್ಲಿಸುತ್ತಿದ್ದರು. ಇಂತಹ ಐತಿಹಾಸಿಕ ವಿಜಯದ ಸಂಕೇತವಾದ ಕೋರೆಗಾಂವ ಚಳವಳಿಯನ್ನು ಮತ್ತೆ ಮತ್ತೆ ನೆನೆಯುವುದು ಇಂದಿನ ಅನಿವಾರ್ಯವೂ ಹೌದು. ಏಕೆಂದರೆ ಬಾಬಾಸಾಹೇಬರೇ ಹೇಳಿದ ಹಾಗೆ “ಇತಿಹಾಸವನ್ನು ತಿಳಿಯದವನು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಾಗದು” ಎಂದಿದ್ದಲ್ಲದೆ ದಲಿತರಾರೂ ಕುರಿಗಳಲ್ಲ, ಅವರು ಹುಲಿಗಳು’ ಎಂದು ಹೇಳಿರುವುದನ್ನು ಮತ್ತೆ ಮತ್ತೆ ಮನನಿಸಬೇಕಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಕುವೆಂಪು ಅವರಿಗೆ ಲಂಕೇಶರ ಎಂಟು ಪ್ರಶ್ನೆಗಳು
ಕುವೆಂಪು ಅವರನ್ನು ನಾನು ಅಂದು ನೋಡಿದ್ದು ಎರಡನೆ ಸಲ. ನಾನು ನೋಡಲು ಬಂದಿರುವ ವಿಷಯ ತಿಳಿದು ಕೈಯಲ್ಲಿ ನನ್ನ ಪ್ರಶ್ನೆ ಮತ್ತು ತಮ್ಮ ಉತ್ತರಗಳಿಂದ ಕೂಡಿದ ಟೈಪ್ ಮಾಡಿದ ಹಾಳೆಗಳನ್ನು ಹಿಡಿದುಕೊಂಡು ಬಂದರು. ನಾನು ಮತ್ತು ಮಿತ್ರ ನೆಲಮನೆ ದೇವೇಗೌಡರು ನಮಸ್ಕರಿಸಿದೊಡನೆ ಕೂತು ಪ್ರಶ್ನೆ ಮತ್ತು ಉತ್ತರಗಳನ್ನು ಓದುತ್ತ ವಿವರಿಸತೊಡಗಿದರು.
ತಮಗೆ ಯಾವುದೇ ಜಾತಿಯ ಬಗ್ಗೆ ಒಣ ಅಭಿಮಾನವಾಗಲಿ ಅನಗತ್ಯ ಪೂರ್ವಗ್ರಹವಾಗಲಿ ಇಲ್ಲವೆಂದು ಸ್ಪಷ್ಟಪಡಿಸಿದರು. ಅವರ ಮಾತಿನಲ್ಲಿ ತಮ್ಮ ಉತ್ತರಗಳು ಜನಕ್ಕೆಲ್ಲಿ ತಿಳಿಯುವುದಿಲ್ಲವೋ ಎಂಬ ಆತಂಕವಿದ್ದಂತಿತ್ತು. ಆದ್ದರಿಂದ ತಮ್ಮ ಕೃತಿಗಳಿಂದ ಉದಾಹರಣೆ ಎತ್ತಿಕೊಂಡು ಮಾತಾಡಿದರು. ನಾನು ಅವೆಲ್ಲವನ್ನೂ ಓದಿದ್ದೆನಾದ್ದರಿಂದ ಆ ವಿವರಣೆ ಅನಗತ್ಯವಾಗಿತ್ತು. ಆದರೆ ಕುವೆಂಪು ಅವರಿಗೆ ಅದಮ್ಯ ಉತ್ಸಾಹವಿದೆ; ಈ ಸಮಾಜದ ಕೆಡಕುಗಳ ಬಗ್ಗೆ ಕೋಪವಿದೆ. ತಾವು ಎಷ್ಟೇ ಬರೆದರೂ ಮಾತಾಡಿದರೂ ಈ ಜನತೆ ಸರಿಹೋಗುತ್ತದೋ ಇಲ್ಲವೋ ಎಂಬ ಸಂದೇಹವಿದೆ. ಆದ್ದರಿಂದಲೇ ಹಲವೊಮ್ಮೆ ವ್ಯಗ್ರವಾಗಿ ಮಾತಾಡುತ್ತಾರೆ. ಅವರು ನನ್ನ ಪ್ರಶ್ನೆಗಳಿಗೆ ಉತ್ತರ ಹೇಳುತ್ತ ಹೊಸ ಸಾಹಿತ್ಯದ ಬಗ್ಗೆ ಮಾತಾಡಿರುವುದನ್ನೂ ಈ ಅರ್ಥದಲ್ಲೇ ತೆಗೆದುಕೊಳ್ಳಬೇಕೆಂದು ಕಾಣುತ್ತದೆ.
ಕಿರಿಯ ಲೇಖಕರು ಯಾರಿಗೂ ಅರ್ಥವಾಗದ ಗೊಂದಲಗಳಲ್ಲಿ ಸಿಲುಕಿಕೊಂಡು ತಮ್ಮನ್ನು ತಾವು ಮೋಸಗೊಳಿಸಿಕೊಳ್ಳುವ ಬದಲು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಳ್ಳಬೇಕೆಂದೂ ಸಮಾಜದ ಅನಿಷ್ಟಗಳನ್ನು ಸರಿಪಡಿಸಬೇಕೆಂದೂ ಅವರು ಸೂಚಿಸುತ್ತಾರೆ. ಇದು ಕಿರಿಯ ಬರಹಗಾರರು ಅನುಭವ ಪಡೆಯುವ ಬಗ್ಗೆ ಉತ್ತಮ ಹಿತವಚನ. ಇನ್ನೊಂದು ಬಗೆಯಲ್ಲಿ ಇದು ನೀತಿ ಪಾಠ. ಇವೆರಡೂ ಕುವೆಂಪು ಮಾತುಗಳಲ್ಲಿರುವುದು ಎಂಥವರಿಗೂ ಕಂಡು ಬರುತ್ತದೆ.
ಆವೊತ್ತು ಮಾತಾಡುವ ಮೂಡಲ್ಲಿದ್ದರು ಕುವೆಂಪು ನಾವಿಬ್ಬರೂ ಕೆಲಸದ ಮೂಡಿನಲ್ಲಿದ್ದೆವು. ಅವರು ತಮ್ಮ ‘ರಾಮಾಯಣ ದರ್ಶನಂ’ನಿಂದ ಓದಿ ತೋರಿಸುವುದಾಗಿ ಸೂಚಿಸಿ ಬೇರೊಂದು ವಿಷಯ ಎತ್ತಿಕೊಂಡು ವಿವರಿಸತೊಡಗಿದರು. ‘ಪಾಂಚಾಲಿ’ ವಿವಿಧ ತೊಡಕುಗಳಲ್ಲಿ ಸಿಲುಕಿದ್ದ ನಾನು ಮತ್ತು ದೇವೇಗೌಡರು ನಮಸ್ಕಾರ ಹೇಳಿ ಹೊರಬಿದ್ದೆವು.
ಕುವೆಂಪು ಒಂದು ಸಂಸ್ಥೆ ಅಥವಾ ದೇವತೆಯಾಗಿ ಹುಂಬರ ಮನಸ್ಸಿನಲ್ಲಿ ಬೆಳೆಯುತ್ತಿದ್ದ ವೇಳೆಗೆ ಸರಿಯಾಗಿ ಅವರು ಮೈಕೊಡವಿಕೊಂಡು ಹೊರಬಂದು ಮನುಷ್ಯರೂ ವಿಚಾರವಾದಿಗಳೂ ಆಗಿ ಮಾತಾಡುತ್ತಿದ್ದುದು ನನಗೆ ಸಂತಸ ಉಂಟುಮಾಡಿತ್ತು.
——————————————————————-
ಲಂಕೇಶ್: ಸಾಮಾನ್ಯವಾಗಿ ಸಾರ್ವಜನಿಕ ಸಭೆಗಳಲ್ಲಿ ಮತ್ತು ವಾದವಿವಾದಗಳಲ್ಲಿ ಭಾಗವಹಿಸದ ತಾವು ಈಚೆಗೆ ಹೀಗೆ ಭಾಗವಹಿಸುವ ಮೂಲಕ ತಮ್ಮ ವಿಶಿಷ್ಟ ಬಗೆಯ ಕೀರ್ತಿಗೆ ಕಳಂಕ ತಂದುಕೊಳ್ಳುತ್ತಿರಬಹುದೇ ಎಂಬ ಅಳುಕು ತಮ್ಮ ಅಭಿಮಾನಿಗಳಲ್ಲಿ ಕೆಲವರಿಗಿದೆ. ಈ ಬಗ್ಗೆ ತಮ್ಮ ಅಭಿಪ್ರಾಯವೇನು?
ಕುವೆಂಪು: ಕೀರ್ತಿಗಿಂತಲೂ ನನಗೆ ಹೆಚ್ಚು ಪ್ರಿಯವಾದದ್ದು ಸತ್ಯ. ಸತ್ಯ ಹೇಳಿದರೆ ಕಲುಷಿತವಾಗುವ ಕೀರ್ತಿ ಭ್ರಷ್ಟಾಚಾರದ ವಸ್ತುವಾಗುತ್ತದೆ. ಅಲ್ಲದೆ ‘ಕೀರ್ತಿಶನಿ’ ಎಂಬ ನನ್ನ ಸಾನೆಟ್ಟಿನಲ್ಲಿ ಅನೇಕ ವರ್ಷಗಳ ಹಿಂದೆಯೇ ನಾನು ಅದನ್ನು ‘ತೊಲಗಾಚೆ’ ಎಂದು ತೊಲಗಿಸಿದ್ದೇನೆ. ಆದರೂ, ಶ್ರೀ ಎ.ಆರ್. ಕೃಷ್ಣಶಾಸ್ತ್ರಿಗಳು ಹೇಳಿದಂತೆ, ಶನಿ ಒಮ್ಮೆ ಬೆನ್ನು ಹತ್ತಿದರೆ ಬಿಡುವುದಿಲ್ಲವಂತೆ. ನನ್ನ ಮತ್ತೊಂದು ಸಾನೆಟ್ ‘ಯಶೋಲಕ್ಷ್ಮಿ’ ಈ ವಿಚಾರವಾಗಿ ನನ್ನ ಭಾವನೆ ಏನು ಎಂಬುದನ್ನು ತಿಳಿಸುತ್ತದೆ. ಕೀರ್ತಿ ಕಲುಷಿತವಾಗುವುದಿರಲಿ ಅಪಕೀರ್ತಿಯೆ ಬಂದರು ಸತ್ಯ ಹೇಳುವುದನ್ನು ಬಿಡುವುದಿಲ್ಲ.
ಲಂಕೇಶ್: ಕೆಟ್ಟಿರಲಿ, ಕೆಡದಿರಲಿ ಭಾರತೀಯ ಸಂಸ್ಕೃತಿಯೆಂದರೆ ವೈದಿಕ ಸಂಸ್ಕೃತಿಯೇ ಎಂಬ ಅಭಿಪ್ರಾಯದ ಬಗ್ಗೆ ನಿಮಗೇನೆನ್ನಿಸುತ್ತದೆ?
ಕುವೆಂಪು: ಇದೊಂದು ತಪ್ಪು ಅಭಿಪ್ರಾಯ. ಭಾರತೀಯ ಸಂಸ್ಕೃತಿ ಬರಿಯ ವೈದಿಕವಲ್ಲ. ಅವೈದಿಕವೂ ಅದರ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಬೌದ್ಧ, ಜೈನಗಳಲ್ಲದೆ ನ್ಯಾಯ, ವೈಶ್ಲೇಷಿಕ, ಸಾಂಖ್ಯ, ಯೋಗ ದರ್ಶನಗಳೂ ವೇದದ ಪರಮ ಪ್ರಾಮಾಣ್ಯವನ್ನು ಅವಿಚಾರಕವಾಗಿ ಒಪ್ಪಬೇಕು ಅನ್ನುವುದಿಲ್ಲ. ನನ್ನದು ವಿಶ್ವಸಂಸ್ಕೃತಿ. ಅಭಾರತೀಯವೂ ಅದರಲ್ಲಿ ಸೇರಿದೆ. ಸನಾತನವೂ (ಪುರಾತನ ಅಲ್ಲ.) ಶಾಶ್ವತವೂ ಆಧ್ಯಾತ್ಮಿಕವೂ ವಿಚಾರ ಮತ್ತು ವಿಜ್ಞಾನಗಳಿಗೆ ಅವಿರುದ್ಧವೂ ಆಗಿರುವ ಸತ್ಯ ಎಲ್ಲಿಯೇ ಇರಲಿ ಅದನ್ನು ನಾನು ಸ್ವೀಕರಿಸಿದ್ದೇನೆ.
ಲಂಕೇಶ್: ಬ್ರಾಹ್ಮಣ ಜಾತಿಯಲ್ಲಿ ಹಲವು ಒಳಪಂಗಡಗಳಿದ್ದರೂ ಕೇವಲ ಒಂದು ಪಂಗಡವನ್ನು ನೀವು ಟೀಕಿಸಿದ್ದು ಕೇವಲ ಉದಾಹರಣೆಗೋ ಅಥವಾ ಆ ಪಂಗಡ ತೀರಾ ಮಲಿನಗೊಂಡಿದೆ ಎಂಬ ಕಾರಣಕ್ಕೋ?
ಕುವೆಂಪು: ನನ್ನ ಭಾಷಣ ಬ್ರಾಹ್ಮಣರಿಗಾಗಲಿ, ಮಾಧ್ವರಿಗಾಗಲೀ ನಿರ್ದೆಶಿಸಿದ್ದಲ್ಲ; ಒಕ್ಕೂಟದವರಿಗಾಗಿ ಮಾತ್ರ. ಜಗತ್ತಿನ ಪುರೋಹಿತಶಾಹಿ ಅವೈಚಾರಿಕ ಮತ್ತು ಅವೈಜ್ಞಾನಿಕ ಮೂಢ ಭಾವನೆಗಳ ಆಶ್ರಯದಲ್ಲಿ ಶ್ರೀ ಸಾಮಾನ್ಯರನ್ನು ಹೇಗೆ ವಂಚಿಸುತ್ತಾ ಬಂದಿದೆ ಎನ್ನುವುದನ್ನು ಕುರಿತು ವಿಚಾರವಾದಿಗಳಾಗಿ ಬಾಳನ್ನು ನಡೆಸಬೇಕು ಎನ್ನುವ ತರುಣರಿಗೆ ತಿಳಿಸುತ್ತಿದ್ದೆ. ಪ್ರಾಸಂಗಿಕವಾಗಿ, ನಾನು ಕೆಲವೇ ದಿನಗಳ ಹಿಂದೆ ಆ ಪುಸ್ತಕಗಳನ್ನು ಓದುತ್ತಿದ್ದು ಸಂಗತಿ ಮನಸ್ಸಿನಲ್ಲಿ ಹೊಚ್ಚ ಹೊಸದಾಗಿ ಇದ್ದುದರಿಂದ ಮಧ್ವ-ಜಯತೀರ್ಥರ ನಿದರ್ಶನಗಳನ್ನು ಕೊಟ್ಟೆನಷ್ಟೆ; ಆಮೇಲೆ ಗುಲ್ಲೆದ್ದ ಮತಭ್ರಾಂತರ ಗಲಾಟೆಯಿಂದಲೇ ಗೊತ್ತಾದದ್ದು ನಾನು ಎಂತಹ ಹೇಸಿಗೆಯ ಹೊಂಡಕ್ಕೆ ಕಲ್ಲು ಎಸೆದಿದ್ದೇನೆ ಎಂದು.
ಲಂಕೇಶ್: ತಮ್ಮ ಕಾವ್ಯದ ಮತ್ತು ಮುಖ್ಯ ಕಥಾಸಾಹಿತ್ಯದ (fiction) ಕೇಂದ್ರ ನಿಲುವು ವೈದಿಕ, ಆದರ್ಶಮಯ, ಅವಾಸ್ತವ ಎಂದು ಹಲವರು ಟೀಕಿಸುತ್ತಾರೆ. ಇದಕ್ಕೆ ತಮ್ಮ ಉತ್ತರವೇನು?
ಕುವೆಂಪು: ಅವರ ತಲೆ; ನನ್ನದು ವಿಶ್ವಪ್ರಜ್ಞೆ. ನಾನು ಭಾರತೀಯನಾಗಿ ಅದರಲ್ಲೂ ಕನ್ನಡಿಗನಾಗಿ ಹುಟ್ಟಿದ್ದರಿಂದ ಆ ಸಂಸ್ಕೃತಿಯ ಮತ್ತು ಆ ಭಾಷೆಯ ಪರಿಭಾಷೆಯನ್ನು ಅನಿವಾರ್ಯವಾಗಿ ಉಪಯೋಗಿಸುತ್ತೇನಷ್ಟೆ. ಸತ್ಯ ವೈದಿಕವಾಗಿ ಪ್ರಕಟವಾದ ಮಾತ್ರಕ್ಕೆ ಅಸತ್ಯವಾಗುವುದಿಲ್ಲ. ಆದರ್ಶಮಯವಾದ ಮಾತ್ರಕ್ಕೆ ಅವಾಸ್ತವವಾಗುವುದಿಲ್ಲ. ನನ್ನ ಭಾಷಣದ ಉದ್ದೇಶವೆ ಒಕ್ಕೂಟದ ಹುಡುಗರನ್ನು ಅಂತಹ ತಪ್ಪುದಾರಿಗೆ ಹೋಗದಿರುವಂತೆ ತಡೆಯಬೇಕು ಎಂಬುದಾಗಿತ್ತು. ಚಿನ್ನದ ಒಡವೆಯನ್ನು ಅಕ್ಕಸಾಲಿ ಮಾಡಿದ ಮಾತ್ರಕ್ಕೆ ಚಿನ್ನ ಅಸತ್ಯವಾಗುತ್ತದೆಯೇ? ಗ್ರಾವಿಟೇಶನ್ ಸಿದ್ಧಾಂತವನ್ನು ನ್ಯೂಟನ್ ಕಂಡುಹಿಡಿದ ಮಾತ್ರಕ್ಕೆ ಅದು ಕ್ರೈಸ್ತವಾಗುತ್ತದೆಯೇ? ವೇದದ ಋಷಿ ಸನಾತನ ಶಾಶ್ವತ ಸತ್ಯವನ್ನು ಸಾಕ್ಷಾತ್ಕರಿಸಿಕೊಂಡು ಅದಕ್ಕೆ ‘ಬ್ರಹ್ಮನ್’ ಎಂದು ಹೆಸರು ಕೊಟ್ಟ ಮಾತ್ರಕ್ಕೆ ಆ ಸತ್ಯ ಆ ಋಷಿಯ ಸೃಷ್ಠಿಯಾಗುತ್ತದೆಯೇ? ಆ ಸತ್ಯ ಋಷಿಗೆ ಪೂರ್ವದಲ್ಲಿಯೇ ಇದ್ದುದು; ಆ ಋಷಿ ಮಾತ್ರವಲ್ಲ ಮನುಷ್ಯರೆಲ್ಲ ಮುಗಿದ ಮೇಲೆಯೂ ಆ ಸತ್ಯಕ್ಕೆ ಚ್ಯುತಿ ಬರುವುದಿಲ್ಲ. ಗುರುತ್ವಾಕರ್ಷಣ ಶಕ್ತಿ ನ್ಯೂಟನ್ನಿಗೆ ಪೂರ್ವದಲ್ಲಿಯೂ ಇತ್ತು, ಮನುಷ್ಯ ಕುಲವೇ ನಾಶವಾದ ಮೇಲೆಯೂ ಇರುತ್ತದೆ.
ಅಂತಹ ಸತ್ಯವನ್ನು ನಿತ್ಯ, ಸನಾತನ ಶಾಶ್ವತ ಎನ್ನುತ್ತೇವೆ. ಬೇರೆ ಬೇರೆ ದೇಶಗಳು, ಬೇರೆ ಬೇರೆ ಭಾಷೆಗಳೂ ಬೇರೆ ಬೇರೆ ಹೆಸರು ಕೊಡಬಹುದಷ್ಟೆ. ನನ್ನ ಜೀವನ ದರ್ಶನ ಅಂತಹ ಅಚ್ಯುತ ಸತ್ಯದ ಮೇಲೆ ನಿಂತಿದೆ. ನನ್ನ ಸಾಹಿತ್ಯವೂ ಅದನ್ನೆ ಅಭಿವ್ಯಕ್ತಗೊಳಿಸುತ್ತದೆ. ಅದನ್ನು ‘ನಿಮ್ಮಲ್ಲಿ’ ಕೆಲವರು ‘ವೈದಿಕ’ ಎಂದು ನಿಂದಿಸುವಂತೆ ‘ಅವರಲ್ಲಿ’ ಕೆಲವರು ‘ಅವೈದಿಕ’ ಎಂದೂ ತಿರಸ್ಕರಿಸುತ್ತಾರೆ. ಆದರೆ ನನ್ನ ಸಾಹಿತ್ಯ ಉದ್ಭವಿಸುವುದು ಬದುಕಿನಿಂದ, ಬದುಕಿಗಾಗಿ; ಮತ್ತು ಬದುಕಿನಾಚೆಯ ಬದುಕಿಗಾಗಿ.
ಲಂಕೇಶ್: ಈಚೆಗೊಬ್ಬರು ತಮ್ಮ ಸಾಮಾಜಿಕ ವಿಮರ್ಶೆಯನ್ನು ಕುರಿತು ಹೇಳುತ್ತಾ ‘ಕುವೆಂಪು ಅವರ ಮಾತಿನಲ್ಲಿ ಬ್ರಾಹ್ಮಣ ವಿರೋಧಿ ಧ್ವನಿ ಕೇಳಿ ಬರುತ್ತಿದ್ದರೆ ಅದಕ್ಕೆ ಕಾರಣವನ್ನು ಅವರ ವೈಯಕ್ತಿಕ ಅನುಭವದಲ್ಲಿ ಹುಡುಕಬೇಕು’ ಎಂದಿದ್ದಾರೆ. ಇದಕ್ಕೆ ತಮ್ಮ ಪ್ರತಿಕ್ರಿಯೆ?
ಕುವೆಂಪು: ಶುದ್ಧ ಅಪಾರ್ಥ! ಮೊದಲನೆಯದಾಗಿ ಅದು ಬ್ರಾಹ್ಮಣ ವಿರೋಧಿ ಧ್ವನಿಯಲ್ಲ. ಅಂದರೆ ಬೌದ್ಧ, ಜೈನ, ಕ್ರೈಸ್ತ, ಇಸ್ಲಾಂ ಮತ್ತು ಲಿಂಗಾಯಿತ ಪುರೋಹಿತಶಾಹಿಯನ್ನೂ ಒಳಗೊಂಡಿದೆ. ನನ್ನ ಪುರೋಹಿತಶಾಹಿ ಖಂಡನೆಗೆ ಕಾರಣವನ್ನು ನನಗಿರಬಹುದಾದ ವೈಯಕ್ತಿಕ ಅನುಭವದಲ್ಲಿ ಹುಡುಕುವುದು ಅತ್ಯಂತ ಹಾಸ್ಯಾಸ್ಪದ. ನನ್ನ ಮೂವತ್ತು ನಲವತ್ತು ವರ್ಷದ ಹಿಂದಿನ ಬರಹವನ್ನು ಯಾರೋ ಒಬ್ಬರು ಅಂದು ಟೀಕಿಸಿದುದಕ್ಕಾಗಿ ಇಂದು ನಾನು ನಲವತ್ತು ವರ್ಷಗಳ ಮೇಲೆ ರೊಚ್ಚು ತೀರಿಸಿಕೊಳ್ಳುವುದಕ್ಕೆ ಹಾಗೆ ಮಾತನಾಡಿದೆನೆಂದು ಹೇಳುವುದು ನನ್ನ ವ್ಯಕ್ತಿತ್ವಕ್ಕೆ ಅತ್ಯಂತ ‘ಅಲ್ಪತನ’ ಆರೋಪಿಸಿದಂತಾಗುತ್ತದೆ. ನಾನು ಅಷ್ಟು ‘ಸಣ್ಣ’ವನಲ್ಲ. ನಲವತ್ತು ಐವತ್ತು ವರ್ಷಗಳಿಂದಲೂ ನಾನು ಗದ್ಯ, ಪದ್ಯ, ನಾಟಕ ಎಲ್ಲದರಲ್ಲಿಯೂ ಹೇಳುತ್ತಾ ಬಂದಿರುವುದನ್ನೆ ಮೊನ್ನೆಯು ಹೇಳಿದ್ದೇನೆ ಅಷ್ಟೆ. ಆದರೆ ಇವರು ಯಾರೂ ನೀವೂ ಸೇರಿ, ನನ್ನ ಬರಹಗಳನ್ನು ಅಷ್ಟು ಆಸ್ಥೆಯಿಂದ ಓದಿಯೇ ಇಲ್ಲ ಎಂಬುದು ನನ್ನ ಗುಮಾನಿ. ಇಡೀ ರಾಮಾಯಣದರ್ಶನವೆ ನನ್ನ ‘ದರ್ಶನ’ಕ್ಕೆ ಒಡ್ಡಿದ ಮಹಾ ಪ್ರತಿಮೆಯಾಗಿದೆ. (ನಿಮ್ಮ ಎರಡನೆಯ ಪ್ರಶ್ನೆಗೆ ಕೊಟ್ಟಿರುವ ಉತ್ತರವನ್ನೂ ನೋಡಬಹುದು.)
ಲಂಕೇಶ್: ‘ಬ್ರಾಹ್ಮಣ’ ‘ಶೂದ್ರ’ ‘ಮಣ್ಣಿನ ವಾಸನೆ’ ಇತ್ಯಾದಿ ಮಾತು ಬಹಳವಾಗಿ ಕೇಳಿಬರುತ್ತಿರುವ ಈ ಕಾಲದಲ್ಲಿ ಬ್ರಾಹ್ಮಣ, ಶೂದ್ರರ ಭಾಷೆ, ಅನುಭವ ದೃಷ್ಟಿಯನ್ನು ಕುರಿತ ತಮ್ಮ ವಿಶ್ಲೇಷಣೆ ಏನು?
ಕುವೆಂಪು: ಈ ಮಾತುಗಳೆಲ್ಲ ಮತ್ತೆ ಪುರೋಹಿತಶಾಹಿಯ ಪಿತೂರಿಯ ಟಂಕಸಾಲೆಯ ನಾಣ್ಯಗಳೆ. ನಿಮ್ಮನ್ನು ದಿಕ್ಕು ತಪ್ಪಿಸಿ ಬದುಕಿನ ಋಜುಮಾರ್ಗದಿಂದ ಕಟಂಕಿತ ಮಾರ್ಗಕ್ಕೆ ತಳ್ಳುವ ಉಪಾಯದಿಂದಲೆ ಅವರು ಅವನ್ನು ಹುಟ್ಟಿಸಿದ್ದಾರೆ. ನೀವೂ ಹಿಂದಿನಂತೆಯೇ ಇಂದು ಬೆಪ್ಪುಗಳಾಗಿ ಅದಕ್ಕೆ ವಶರಾಗಿ, ಜನರ ಬದುಕನ್ನು ಮತಮೌಢ್ಯದಿಂದ ಪಾರು ಮಾಡಿ ಅವರನ್ನು ವೈಚಾರಿಕ ಬುದ್ಧಿ ಮತ್ತು ವೈಜ್ಞಾನಿಕ ದೃಷ್ಟಿ ಸಂಪನ್ನರಾಗಿ ಪರಿವರ್ತಿಸಿ ಅವರ ಮನಸ್ಸು ಮತ್ತು ಹೃದಯಗಳನ್ನು ಬೆಳಗುವ, ಅವರ ಸೋತ ಹೃದಯಗಳನ್ನು ಹುರಿದುಂಬಿಸುವ, ಮತ್ತು ವರ್ಣ, ಜಾತಿ ಭೇದಭಾವನೆಗಳನ್ನೆಲ್ಲ ಕಸದ ಬುಟ್ಟಿಗೆ ತೂರಿ ಅವರನ್ನು ಸಮಾನತಾವಾದಿಗಳನ್ನಾಗಿ ಪರಿವರ್ತಿಸುವ ಸಾಹಿತ್ಯ ಸೃಷ್ಟಿ ಮಾಡುವ ಬದಲು, ಗುಂಪುಗಾರಿಕೆಗಲ್ಲದೆ ಮತ್ತೆ ಯಾರಿಗೂ ಬೇಡದ ಮತ್ತು ಯಾರಿಗೂ ಅರ್ಥವಾಗದ ‘ನವ್ಯ’ ನಾಮಕ ವಿಕಾರ ಸೃಷ್ಟಿಗೆ ಮರುಳಾಗಿ ಹೋಗಿದ್ದೀರಿ. ಅಂತಹ ಕೃತಕ ಅನುಕರಣೀಯ ಪಂಥಗಳನ್ನೆಲ್ಲ ನಿಮ್ಮ ಹೃದಯದಿಂದ ಕಿತ್ತೊಗೆದು, ನಿಮ್ಮವರ ಬದುಕನ್ನು ನೇರವಾಗಿ ನೋಡಿ ಅದರಿಂದ ಉದ್ಭವಿಸುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರನ್ನು ಮೇಲಕ್ಕೆತ್ತುವ ಧೀರಭಾವಗಳನ್ನೂ ಕ್ರಿಯಾಶೀಲ ಆದರ್ಶಗಳನ್ನೂ ನಿಮ್ಮ ಬರವಣಿಗೆಗಳಲ್ಲಿ ನೀಡಬೇಕಾಗಿರುವುದು ಸದ್ಯದ ನಿಮ್ಮ ಆದ್ಯ ಕರ್ತವ್ಯ. ಪುರೋಹಿತಶಾಹಿಯ ಮೆಚ್ಚುಗೆಗೂ ಹೊಗಳಿಕೆಗೂ ಹಾತೊರೆದು ಬಾಯಿ ಬಿಟ್ಟು ನಿಮ್ಮ ಪೌರುಷ ತೇಜಸ್ಸುಗಳಿಗೆ ಅಪಮಾನ ಮಡಿಕೊಳ್ಳುವುದನ್ನು ಒಡನೆಯೇ ನಿಲ್ಲಿಸಿಬಿಡಿ. (ಮಾನಸ ಗಂಗೋತ್ರಿಯಲ್ಲಿ ಏರ್ಪಡಿಸಿದ್ದ ಲೇಖಕರ ಗೋಷ್ಠಿಯನ್ನು ಉದ್ಘಾಟಿಸುತ್ತಾ ನಾನು ಮಾಡಿದ ಭಾಷಣವನ್ನು ಗಮನವಿಟ್ಟು ಓದಿ ನೋಡಿದರೆ ನನ್ನ ಅಭಿಪ್ರಾಯಗಳು ಸ್ಪಷ್ಟಗೊಳ್ಳುತ್ತವೆ.)
ಲಂಕೇಶ್: ಕನ್ನಡ ಸಾಹಿತಿಗಳು ಬಹುಕಾಲದಿಂದ ಈ ನಾಡ ಹೆಸರಿನ ಬದಲಾವಣೆ, ಕನ್ನಡ ಮಾಧ್ಯಮ ಕುರಿತು ಮಾತನ್ನಾಡುತಿದ್ದರೂ ಕೇವಲ ಹೆಸರಿನ ಬದಲಾವಣೆ ಮಾತ್ರ ಆಗಿ ಮಾಧ್ಯಮದ ಪ್ರಶ್ನೆ ಹಾಗೇ ಉಳಿದಿದೆ. ಇದು ಸಾಹಿತಿಯ ಪ್ರಭಾವದ ದೌರ್ಬಲ್ಯ ತೋರುತ್ತದೆಯೆ?
ಕುವೆಂಪು: ಹಾಗೇನಿಲ್ಲ, ಈಗಾಗಲೆ ತಕ್ಕಷ್ಟು ಕಾರ್ಯ ನಡೆದಿದೆ. ನಡೆಯುತ್ತಲೂ ಇದೆ. ಜನತೆ, ಸರಕಾರ, ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾಲಯಗಳು ಎಲ್ಲವೂ ಕನ್ನಡ ಮಾಧ್ಯಮ ತತ್ವವನೊಪ್ಪಿ ಕ್ರಿಯಾಶೀಲವಾಗಿ ಮುಂದುವರೆಯುತ್ತಿವೆ. ಅದು ಪೂರ್ತಿ ಕೈಗೂಡಲು ತುಸು ಸಮಯ ಬೇಕಾಗಬಹುದು ಅಷ್ಟೆ.
ಲಂಕೇಶ್: ಈ ನಾಡ ತರುಣರಿಗೆ ತಮ್ಮ ಹಿತವಚನವೇನು?
ಕುವೆಂಪು: ನನ್ನ ಸಾಹಿತ್ಯದಲ್ಲಿ- ಕತೆ, ಕಾದಂಬರಿ, ಭಾವಗೀತೆ, ಕಾವ್ಯ, ಮಹಾಕಾವ್ಯ, ಜೀವನ ಚರಿತ್ರೆ, ಭಾಷಣ, ವಿಮರ್ಶೆ ಇತ್ಯಾದಿ- ನಾನು ಹೇಳಬೇಕಾದ್ದೆಲ್ಲವನ್ನೂ ಹೇಳಿದ್ದೇನೆ. ಇಷ್ಟವಿರುವ ತರುಣರು ಅವುಗಳನ್ನು ಮನಸ್ಸಿಟ್ಟು ಓದಲಿ. ವಿಶೇಷವಾಗಿ, ಅದರ ಮುನ್ನುಡಿ ಸಹಿತ ‘ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ’ ಎಂಬ ಪುಸ್ತಕದ ನಾಲ್ಕು ಭಾಷಣಗಳನ್ನಾದರೂ ಓದಲಿ. ಆದರೆ ನಾಲ್ಕನ್ನೂ ಸಮಗ್ರವಾಗಿ ತೆಗೆದುಕೊಳ್ಳಬೇಕು, ಅಷ್ಟೆ.- ಸರ್ವೋದಯ, ಸಮನ್ವಯ ಮತ್ತು ಪೂರ್ಣದೃಷ್ಟಿ ಇವುಗಳೇ ಎಲ್ಲರ ಧ್ಯೇಯಮಂತ್ರಗಳಾಗಲಿ.
ಕೃಪೆ: -‘ಪಾಂಚಾಲಿ’ (ದೀಪಾವಳಿ-ರಾಜ್ಯೋತ್ಸವ ವಿಶೇಷ ಸಂಚಿಕೆ, ಪುಟ: 11-14, 1974)
ಸಂಪಾದಕರು: ಪಿ. ಲಂಕೇಶ್
ಸುದ್ದಿದಿನ.ಕಾಂ|ವಾಟ್ಸಾಪ್|9980346243



