Connect with us

ಅಂತರಂಗ

ನುಡಿಯ ಒಡಲು -09 | ನುಡಿ ಮತ್ತು ಮೆದುಳು

Published

on

  • ಡಾ. ಮೇಟಿ ಮಲ್ಲಿಕಾರ್ಜುನ, ಸಹ ಪ್ರಾಧ್ಯಾಪಕರು,ಭಾಷಾಶಾಸ್ತ್ರ ವಿಭಾಗ, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ನುಡಿ ಮತ್ತು ಮೆದುಳುಗಳ ನಡುವಣ ನಂಟಸ್ತಿಕೆ ಎಂತಹದು? ನುಡಿಗೂ ಹಾಗೂ ಮೆದುಳಿಗೂ ನೇರವಾದ ನಂಟಸ್ತಿಕೆ ಇರುವುದರಿಂದ, ಈ ಎರಡೂ ಸಂಗತಿಗಳನ್ನು ಇಲ್ಲಿ ಚರ್ಚಿಸುವ ಅಗತ್ಯವಿದೆ. ಮೆದುಳು ಹಾಗೂ ನುಡಿಯ ನಡುವಣ ನಂಟಸ್ತಿಕೆ ಎಂತಹದು? ಯಾವ ಬಗೆಯಲ್ಲಿ ಮೆದುಳು ನುಡಿಯೊಂದಿಗೆ ನಂಟಸ್ತಿಕೆಉನ್ನು ಬೆಳೆಸಿಕೊಂಡಿರುತ್ತದೆ? ಹಾಗೂ ಈಗಾಗಲೇ ಈ ಹಿಂದೆ ಚರ್ಚಿಸಿದಂತೆ, ನುಡಿ ಮಾನವರಿಗೆ ಒದಗಿರುವ ಒಂದು ಅಂತಸ್ಥ ಸಾಮರ್ಥ್ಯ.

ಈ ಸಾಮರ್ಥ್ಯ ಅವರ ಮೆದುಳಿನಲ್ಲಿ ಯಾವ ಜಾಗದಲ್ಲಿ ಅಂತರ್ಗತವಾಗಿರುತ್ತದೆ. ಮಾನವರ ಮೆದುಳಿನ ರಚನೆಯ ಮೂಲಸ್ವರೂಪವನ್ನು ಅರಿಯುವುದರ ಜೊತೆಗೆ ನುಡಿಯ ಬಗೆಗಿನ ಕೆಲವು ಕುತೂಹಲಕಾರಿ ಸಂಗತಿಗಳನ್ನು ತಿಳಿಯಬಹುದು. ಮಾನವರಲ್ಲಿ ಜನ್ಮಜಾತವಾಗಿ ನುಡಿಯನ್ನು ಗಳಿಸಿಕೊಳ್ಳುವ ಅಂತಸ್ಥ ಸಾಮರ್ಥ್ಯ ಅವರ ಮೆದುಳಿನಲ್ಲಿ ಅಂತರ್ಗತವಾಗಿರುತ್ತದೆ. ಚಾಮ್‌ಸ್ಕಿಯ ಈ ನಿಲುವನ್ನು ಎರಿಕ್ ಲೆನ್‌ಬರ್ಗ್ ಒಪ್ಪಿಕೊಳ್ಳುತ್ತಾನೆ ದಿಟ.

ಆದರೆ ನುಡಿ ಗಳಿಕೆಯ ಪ್ರಕ್ರಿಯೆಯ ಬಗೆಗೆ ಕೆಲವು ಮಹತ್ವದ ಹೊಳವುಗಳನ್ನು ಅವನು ಕೊಡುತ್ತಾನೆ. ನುಡಿ ಗಳಿಕೆಗೆ ಒಂದು ನಿಶ್ಚಿತ ಗಡುವು (ಕ್ರಿಟಿಕಲ್ ಪಿರಿಯೇಡ್) ಇರುತ್ತದೆ. ಆ ನಿಗದಿತ ಗಡುವಿನೊಳಗೆ ಪ್ರತಿ ಮಗು ತನಗೆ ಸಿಗುವ ನುಡಿಯ ಹೂಡುವಳಿಗಳ (ಇನ್‌ಪುಟ್ಸ್) ಮೂಲಕ, ತನ್ನಲ್ಲಿರುವ ಅಂತಸ್ಥ ಸಾಮರ್ಥ್ಯವನ್ನು ಬಳಸಿಕೊಂಡು ನುಡಿಯನ್ನು ಗಳಸಿಕೊಳ್ಳದೇ ಹೋದರೆ, ಆ ಮಗುವಿಗೆ ಮುಂದೆಂದೂ ನುಡಿಯನ್ನು ಕಲಿಯಲು/ಪಡೆದುಕೊಳ್ಳಲು ಸಾಧ್ಯವಾಗುವುದಿಲ್ಲ.

ಲೆನ್‌ಬರ್ಗ್ ತನ್ನ ಈ ಚಿಂತನೆಯನ್ನು ವಿವರಿಸುವುದಕ್ಕೆ ಪ್ರೌಢಿಮೆ (ಮ್ಯಾಚ್ಯುರೇಶನ್) ಎಂಬ ಒಂದು ಅರಿಮೆ ಪದವನ್ನು ಹುಟ್ಟುಹಾಕುತ್ತಾನೆ. ಈ ಪ್ರೌಢಿಮೆಯ ಅವಧಿ ಹದಿನೆಂಟು ತಿಂಗಳಿಂದ ಹನ್ನೆರಡು ಇಲ್ಲವೇ ಹದಿನಾಲ್ಕು (ಪಬರ್ಟಿಯ ಕಾಲದವರಗೆ) ವರುಷಗಳವರೆಗೆ ಗುರುತಿಸುತ್ತಾನೆ. ಈ ಪ್ರೌಢಿಮೆ ಪ್ರಕ್ರಿಯೆಯಲ್ಲಿಯೇ ನುಡಿಗಳಿಕೆಯ ನೆಲೆಗಳು ಅಡಕಗೊಂಡಿರುತ್ತವೆ. ಇವನ ಈ ತರ್ಕಕ್ಕೆ ಮುಖ್ಯ ಕಾರಣವೇ ಮಗ್ಗಲಾಗುವಿಕೆ (ಲ್ಯಾಟರಲೈಜೇಶನ್). ಈ ಅರಿಮೆಯ ಪದದ ಕಣ್ನೋಟದಿಂದ ನುಡಿ ಗಳಿಕೆಯ ನೆಲೆಗಳನ್ನು ಇನ್ನಷ್ಟು ವಿವರವಾಗಿ ನೋಡಬಹುದು.

ಪ್ರತಿಯೊಂದು ಸಾಮನ್ಯ ಮಗು ಕೂಡ ಈ ಮಗ್ಗಲಾಗುವಿಕೆಯ ಪ್ರಕ್ರಿಯೆಯಲ್ಲಿಯೆ ತನ್ನ ಎಲ್ಲ ಗ್ರಹಿಕಾ ಸಾಮರ್ಥ್ಯಗಳನ್ನು ಮೆದುಳಿನ ಬೇರೆ ಬೇರೆ ಭಾಗಗಳಲ್ಲಿ ನೆಲೆಗೊಳಿಸುವಲ್ಲಿ ನಿರತವಾಗಿರುತ್ತದೆ. ನುಡಿ ಗಳಿಕೆಯ ಪ್ರಕ್ರಿಯೆಯೂ ಈ ಮಗ್ಗಲಾಗುವಿಕೆಯ ಭಾಗವೇ ಆಗಿರುತ್ತದೆ. ಮಕ್ಕಳು ತಮ್ಮ ಮೆದುಳಿನ ನಿಶ್ಚಿತ ಭಾಗಗಳಲ್ಲಿ, ಈ ಮಗ್ಗಲಾಗುವಿಕೆಯ ಕಾಲದಲ್ಲಿಯೇ, ತಮ್ಮಲ್ಲಿರುವ ಅಂತಸ್ಥ ಸಾಮರ್ಥ್ಯದ ಮೂಲಕ ನುಡಿಯ ಬಹುತೇಕ ನೆಲೆಗಳನ್ನು ಪಡೆದುಕೊಳ್ಳುತ್ತಾರೆ. ಆದರೆ ಈ ಪ್ರಕ್ರಿಯೆ ಮಕ್ಕಳಿಗೆ ಸಿಗುವ ನುಡಿಯ ಹೂಡುವಳಿ (ಇನ್‌ಪುಟ್ಸ್) ಗಳನ್ನೂ ನಂಬಿಕೊಂಡಿರುತ್ತದೆ ಎಂಬುದನ್ನೂ ಗಮನಿಸಬೇಕಾಗುತ್ತದೆ.

ಒಂದು ಸಲ ಈ ಮಗ್ಗಲಾಗುವಿಕೆಯ ಕೆಲಸ ಮುಗಿದ ಮೇಲೆ ನುಡಿಯನ್ನು ಗಳಿಸಿಕೊಳ್ಳುವ ಕಸುವು ಸ್ಥಗಿತವಾಗುತ್ತದೆ. ಆದರೆ ಎಂದಿನಂತೆ, ಈ ಮಗ್ಗಲಾಗುವಿಕೆ ಮಗುವಿಗೆ ಆಯಾ ನುಡಿಯ ಸೊಲ್ಲರಿಮೆಯ/ವ್ಯಾಕರಣ ತಿಳಿವನ್ನು ಗಳಿಸಿಕೊಳ್ಳಲು ಅಗತ್ಯಕ್ಕಿಂತ ಹೆಚ್ಚು ಅವಕಾಶವನ್ನು ಕೊಡುತ್ತದೆ. ಹೆಚ್ಚಿನ ಮಂದಿಗೆ ಈ ನುಡಿ ಗಳಿಕೆಯ ನೆಲೆ ಅವರ ಎಡಮೆದುಳಿನಲ್ಲಿಯೇ ಕೊನೆಗೊಳ್ಳುತ್ತದೆ.

ನಿರ್ಣಾಯಕ ಕಾಲ (ಕ್ರಿಟಿಕಲ್ ಪಿರಿಯೆಡ್) ಮೀರಿದ ಮೇಲೆ, ನುಡಿ ಬೆಳವಣಿಗೆ/ಗಳಿಕೆಯ ಸಹಜ ಸ್ಥಿತಿ ನಿಂತ ಮೇಲೆ, ಒಂದುವೇಳೆ ಎಡಮೆದುಳಿಗೆ ಏನಾದರೂ ಎರವು [ಡ್ಯಾಮೇಜ್] ಉಂಟಾದರೆ, ಅಂತಹ ಎರವು ಖಾಯಂ ಆಗಿಯೇ ಉಳಿಯುತ್ತದೆ. ಕೇವಲ ಕಿರಿಯ ವಯಸ್ಸಿನ ಮಕ್ಕಳು ಮಾತ್ರ ತಮ್ಮ ಬಲಮೆದುಳನ್ನು ಬಳಸಿಕೊಂಡು ನುಡಿಯನ್ನು ಗಳಸಿಕೊಳ್ಳುವ ಸಾಮರ್ಥ್ಯವನ್ನು ತೋರಿಸುತ್ತಾರೆ.

ಆದರೆ ಈ ನಿರ್ಣಾಯಕ ಕಾಲದಲ್ಲಿ ಸಾಮನ್ಯ ಮಗು ಅತ್ಯಂತ ಸುಲಭವಾಗಿ ನುಡಿಯನ್ನು ಗಳಿಸಿಕೊಳ್ಳುತ್ತದೆ ಎಂಬುದು ಮಾತ್ರ ದಿಟ. ಈ ನಿರ್ಣಾಯಕ ಕಾಲ ಎಂಬ ನೆಲೆಯೂ ಜೈವಿಕವಾಗಿ ನಿರ್ಧರಿಸಲ್ಪಟ್ಟಿರುತ್ತದೆ. ಹಾಗಾಗಿ ನುಡಿ ಗಳಿಕೆಗೆ ಯಾವ ಕಾಲ ಸುಳುವಾಗಿರುತ್ತೆ ಮತ್ತು ಯಾವುದು ಕಷ್ಟಕರವಾಗಿರುತ್ತೆ ಎಂಬ ಸಂಗತಿಗಳೂ ಮೊದಲೇ ನಿರ್ಧಾರವಾಗಿರುತ್ತವೆ.

ಲೆನ್‌ಬರ್ಗ್ನ ಪ್ರಕಾರ ನುಡಿ ಗಳಿಕೆಯ ಪ್ರಕ್ರಿಯೆ ಅಂಬೆಗಾಲಿಡುವ ಮಗುವಿಂದ ಶುರುವಾಗಿ ಹದಿಹರೆಯದಲ್ಲಿ ಕೊನೆಗೊಳ್ಳುತ್ತದೆ. ಮತ್ತು ಇದರ ಜೊತೆಗೇನೆ ಮಗ್ಗಲಾಗುವಿಕೆ ಪ್ರಕ್ರಿಯೆಯೂ ಕೊನೆಗೊಳ್ಳುತ್ತದೆ. ಈ ವೇಳೆಯಲ್ಲಿ ಯಾವುದೇ ಔಪಚಾರಿಕ ತರಬೇತಿಯಿಲ್ಲದೇ ಮಗು ತನ್ನ ತಾಯ್ನುಡಿ ಇಲ್ಲವೇ ಮೊದಲ ನುಡಿಯನ್ನು ಅತ್ಯಂತ ಸುಳುವಾಗಿ ಕಲಿಯಬಲ್ಲದು. ಹದಿಹರಯ ಇಲ್ಲವೇ ಪಬರ್ಟಿಯ ನಂತರ ನುಡಿ ಗಳಿಕೆಯ ಕಸುವು ತನ್ನಷ್ಟಕ್ಕೆ ಸ್ಥಗಿತಗೊಳ್ಳುತ್ತದೆ.

ಎಡಮೆದುಳು ಮತ್ತು ಬಲಮೆದುಳು
ಮೆದುಳು ಮೋಟರ್, ಸೆನ್ಸರಿ ಚಟುವಟಿಕೆ ಹಾಗೂ ಚಿಂತನೆಯ ಪ್ರಕ್ರಿಯೆಯನ್ನು ನಿಯಂತ್ರಿಸುತ್ತದೆ. ಬೌದ್ಧಿಕ (ಸೆರೆಬ್ರಲ್) ಮೆದುಳನ್ನು ಎಡ ಮತ್ತು ಬಲ ಎಂದು ಎರಡು ಭಾಗಗಳನ್ನಾಗಿ ವಿಂಗಡಿಸಲಾಗುತ್ತದೆ. ಈ ಎರಡೂ ಭಾಗಗಳು ಕೆಲವು ವಿಶೇಷ ರಚನೆ ಹಾಗೂ ಕ್ರಿಯೆಗಳನ್ನು ನೆರವೇರಿಸುವಂತೆ ಕಾಣುತ್ತವೆ. ಇವುಗಳಲ್ಲಿ ಕೆಲವಷ್ಟು ಕ್ರಿಯೆಗಳು ಎಡಮೆದುಳಿನಲ್ಲಿ ಉಂಟಾದರೆ, ಮತ್ತೆ ಕಲವು ಕ್ರಿಯೆಗಳು ಬಲಮೆದುಳಿನಲ್ಲಿ ಉಂಟಾಗುತ್ತವೆ. ಲೆನ್‌ಬರ್ಗ್ನ ಪ್ರಕಾರ ಮೆದುಳು ಹೀಗೆ ಇಬ್ಭಾಗವಾಗುವ ಬಗೆಯನ್ನು ಮಗ್ಗಲಾಗುವಿಕೆ (ಲ್ಯಾಟರಲೈಜೇಶನ್) ಎಂದು ಕರೆಯಲಾಗುತ್ತದೆ.

ಇವುಗಳು ಒಂದಕ್ಕೊಂದು ಕನ್ನಡಿ ಬಿಂಬದಂತೆ ಕೆಲಸ ಮಾಡುತ್ತವೆ. ಎಡಮೆದುಳು ದೇಹದ ಬಲಗಡೆಯನ್ನು ನಿಯಂತ್ರಿಸಿದರೆ, ಬಲಮೆದುಳು ದೇಹದ ಎಡಗಡೆಯನ್ನು ನಿಯಂತ್ರಿಸುತ್ತದೆ. ಮತ್ತಿತರ ತಜ್ಞ ಕ್ರಿಯೆಗಳನ್ನು ಮೆದುಳಿನ ಎರಡೂ ಭಾಗಗಳು ನಿಭಾಯಿಸುತ್ತವೆ. ಈ ನಿಟ್ಟಿನಲ್ಲಿ ಸಾಕಷ್ಟು ಸಂಶೋಧನೆಗಳು ನಡೆದಿವೆಯಾದರೂ, ಈ ನಿಲುವುಗಳನ್ನು ಸಮರ್ಥಿಸುವಷ್ಟು ಆಧಾರಗಳು ಇನ್ನೂ ಸಿಕ್ಕಿಲ್ಲ. ಆದರೆ ಈ ಎರಡೂ ಭಾಗಗಳಲ್ಲಿ ಎಡಮೆದುಳಿನ ಭಾಗವೇ ಹೆಚ್ಚು ಪ್ರಾಬಲ್ಯವನ್ನು ಹೊಂದಿದೆ.

ನುಡಿ ಸಂಬಂಧಿ ಚಟುವಟಿಕೆಗಳಿಗೆ ಈ ಭಾಗವೇ ಹೊಣೆಯಾಗಿರುವ ಕಾರಣ ಸಹಜವಾಗಿಯೇ ಎಡಮೆದುಳಿನ ಭಾಗ ಪ್ರಾಬಲ್ಯವನ್ನು ಹೊಂದಿದೆ. ಏಕೆಂದರೆ, ನುಡಿಗೆ ಸಂಬಂಧಿಸಿದ ಬ್ರೊಕಾ ಮತ್ತು ವರ್ನಿಕ್ ಏರಿಯಾಗಳು, ಆರ್ಕ್ಯುವೇಟ್ ಫ್ಯಾಸಿಕುಲಸ್, ಆಂಗ್ಯುಲರ್ ಗಯ್ರಸ್ ಈ ಎಲ್ಲ ಜಾಗಗಳೂ ಎಡಮೆದುಳಿನಲ್ಲಿ ನೆಲೆನಿಂತುರಿವುದು ಕೂಡ ಇಂತಹ ಪ್ರಾಬಲ್ಯಕ್ಕೆ ಒತ್ತಾಸೆಯಾಗಿರಬಹುದು.

ಅಫೇಶಿಯಾ (ಮಾತಿನ ಕಸುವನ್ನು ಕಳೆದುಕೊಳ್ಳುವ ಬಗೆ. ಇದು ಬೇರೆ ಬೇರೆ ನೆಲೆಗಳಲ್ಲಿ ಇಲ್ಲವೇ ಸ್ವರೂಪಗಳಲ್ಲಿ ಉಂಟಾಗುತ್ತದೆ. ಇದು ಕೂಡ ಒಂದು ಕಾಯಿಲೆ?) ಬಗೆಗಿನ ಅಧ್ಯಯನಗಳು ಹೇಳುವಂತೆ ನುಡಿ ಕುರಿತ ಚಟುವಟಿಕೆಗಳು ಮೊದಲಾಗುವುದೇ ಎಡಮೆದುಳಿನಲ್ಲಿ. ಮೆದುಳಿನಲ್ಲಿ ಮಗ್ಗಲಾಗುವಿಕೆ ಕೆಲಸ ನಡೆಯುತ್ತದೆ ಎಂಬ ಸಂಗತಿಯನ್ನು ತಿಳಿಯಲು ಕೂಡ ಈ ಅಧ್ಯಯನಗಳೇ ಆಧಾರವಾಗಿವೆ. ಸ್ಟೇನ್‌ಬರ್ಗ್ನ ಪ್ರಕಾರ ಸೀಳು ಮೆದುಳಿನ (ಸ್ಪ್ಲಿಟ್‌ಬ್ರೇನ್) ರೋಗಿಗಳು, ಮೆದುಳು ಮಗ್ಗಲಾಗುವಿಕೆಗೆ ಬೇಕಾಗುವ ಇನ್ನೂ ಹೆಚ್ಚಿನ ಆಧಾರಗಳನ್ನು ಒದಗಿಸುತ್ತಾರೆ.

ಆದರೆ ಈ ಸೀಳು ಮೆದುಳಿನ ರೋಗಿಗಳಲ್ಲಿ ಎಡ ಮತ್ತು ಬಲ ಎರಡೂ ಮೆದುಳುಗಳು ಪ್ರತ್ಯೇಕವಾಗಿ ಕೆಲಸ ಮಾಡುತ್ತವೆ. ಆರೋಗ್ಯವಂತರ ಮೆದುಳಿನಂತೆ ಇವು ಒಂದಕ್ಕೊಂದು ಪೂರಕವಾಗಿ ಕೆಲಸ ಮಾಡುವುದಿಲ್ಲ. ಹಾಗೂ ಇವುಗಳ ನಡುವೆ ಯಾವ ಬಗೆಯ ಹೊಂದಾಣಿಕೆಯೂ ಇರುವುದಿಲ್ಲ. ಅಂದರೆ ಒಂದು ಮೆದುಳಿನಲ್ಲಿ ಇರುವ ಮಾಹಿತಿ ಮತ್ತೊಂದಕ್ಕೆ ರವಾನೆಯಾಗುವುದಿಲ್ಲ. ಆದರೆ ಆರೋಗ್ಯವಂತರ ಮೆದುಳಿನ ಈ ಎರಡೂ ಭಾಗಗಳು ಎಷ್ಟೊಂದು ವಿಷಯಗಳಲ್ಲಿ ಒಂದಕ್ಕೊಂದು ನೆರವಾಗುತ್ತವೆ ಎನ್ನುವುದು ವಿಶೇಷ.

ಡಾ.ಮೇಟಿ ಮಲ್ಲಿಕಾರ್ಜುನ್, ಪ್ರಾಧ್ಯಾಪಕರು, ಭಾಷಾಶಾಸ್ತ್ರ ವಿಭಾಗ, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ಮೆದುಳಿನ ಯಾವ ಜಾಗದಲ್ಲಿ ಏನಿರುತ್ತದೆ?
ನುಡಿ, ತರ್ಕ, ವಿಶ್ಲೇಷಣಾತ್ಮಕ ಚಟುವಟಿಕೆ, ಗಣಿತಶಾಸ್ತ್ರದಲ್ಲಿ ವಿಶೇಷ ತಜ್ಞತೆ ಇವುಗಳನ್ನೆಲ್ಲ ಒಳಗೊಂಡಿರುವ ಜಾಗವೇ ಎಡಮೆದುಳು. ಹಲವಾರು ಅಧ್ಯಯನಗಳ ಮೂಲಕ ಈ ಸಂಗತಿ ಸಾಬೀತಾಗಿದೆ. ಬ್ರೊಕಾ ಮತ್ತು ವರ್ನಿಕ್ ಏರಿಯಾಗಳು, ಆರ್ಕ್ಯುವೇಟ್ ಫ್ಯಾಸಿಕುಲಸ್, ಆಂಗ್ಯುಲರ್ ಗಯ್ರಸ್ ಈ ಎಲ್ಲ ಜಾಗಗಳು ನುಡಿಯ ತಿಳುವಳಿಕೆ ಮತ್ತು ಉತ್ಪಾದನೆಯನ್ನು ನಿಯಂತ್ರಿಸುವ ಜಾಗಗಳೇ ಆಗಿವೆ ಎಂಬುದು ಗಮನಾರ್ಹ.

ಭಾವನೆಗಳನ್ನು ಹುಟ್ಟಿಸುವ ಹಾಗೂ ಅವುಗಳನ್ನು ಗುರುತಿಸುವ ನೆಲೆಗಳು, ಮುಖ ಚಹರೆಗಳನ್ನು ಗುರುತಿಸುವ, ವಸ್ತುಗಳ ರಾಚನಿಕ ಸ್ವರೂಪವನ್ನು ಸಾರ್ವತ್ರಿಕವಾಗಿ ಗ್ರಹಿಸುವ ನೆಲೆಗಳನ್ನು ಬಲಮೆದುಳೇ ಒಳಗೊಂಡಿರುತ್ತದೆ. ಮತ್ತು ಸಂಗೀತ, ಅತ್ಯಂತ ತೊಡಕಿನ ಕಣ್ನೋಟದ ಬಗೆಗಳು ಕೂಡ ಬಲಮೆದುಳಿನಲ್ಲಯೇ ಕ್ರಿಯಾಶೀಲವಾಗಿರುತ್ತವೆ. ನುಡಿಗೆ ಹೊರತಾದ ಉಲಿಗಳು ಅಂದರೆ, ಸಪ್ಪಳ ಹಾಗೂ ಪ್ರಾಣಿಗಳ ಕೂಗಾಟದ ಉಲಿಗಳನ್ನೂ ಬಲಮೆದುಳು ಒಳಗೊಂಡಿರುತ್ತದೆ. ಎಡಮೆದುಳನ್ನು ಯಾವುದೇ ಅಪಾಯ ಇಲ್ಲವೇ ಕಾಯಿಲೆಯ ಕಾರಣ ತೆಗೆದು ಹಾಕಿದರೆ, ನುಡಿಗೆ ಸಂಬಂಧಿಸಿದ ಕೆಲಸವನ್ನು ಇದು ವಹಿಸಿಕೊಳ್ಳುತ್ತದೆ.

ಪೌಲ್ ಬ್ರೋಕಾ ಮತ್ತು ಕರ‍್ಲ್ ವರ್ನಿಕ್

ಯಾರಿವರು? ಪೌಲ್ ಬ್ರೋಕಾ ಇವನೊಬ್ಬ ಫ್ರೆಂಚ್ ಸರ್ಜನ್/ನರತಜ್ಞ (ನ್ಯೂರೋಅನಾಟಮಿಸ್ಟ್). ಇವನು ಯುದ್ಧದ ಗಾಯಾಳುಗಳ ಜೀವವನ್ನು ಉಳಿಸುವ ಕೆಲಸದಲ್ಲಿ ತೊಡಗಿಕೊಂಡಿದ್ದನು. ಈ ಗಾಯಾಳುಗಳಿಗೆ ಚಿಕಿತ್ಸಿಸುವಾಗ ಅವನು ತೀರಾ ನಿಗಾವಹಿಸಿ ಎಲ್ಲರನ್ನು ಗಮನಿಸುತ್ತಿದ್ದನು. ಹಾಗೂ ಆ ಎಲ್ಲ ಗಾಯಾಳುಗಳನ್ನು ತುಂಬಾ ಕಾಳಜಿಯಿಂದಲೂ ನೋಡಿಕೊಳ್ಳುತ್ತಿದ್ದನು. ಅಸಾಧಾರಣವಾದದ್ದನ್ನು ಕಂಡುಹಿಡಿಯಲು ಕಾರಣವೇ ಅವನ ಈ ಬದ್ಧತೆ ಎಂದು ಹೇಳಬಹುದು.

ಇವನ ಚಿಕಿತ್ಸೆಯಿಂದ ಚೇತರಿಸಿಕೊಂಡ ಒಂದಿಷ್ಟು ಗಾಯಾಳುಗಳು ಎಲ್ಲ ರೀತಿಯಿಂದಲೂ ಸಹಜವಾಗಿಯೇ ಕಾಣುತ್ತಿದ್ದರು. ಆದರೆ ಇವರೆಲ್ಲರೂ ಮಾತಿನ ಕೊರತೆಯಿಂದ ಬಳಲುತ್ತಿದ್ದರು. ಈ ರೋಗಿಗಳ ಎಡಮೆದುಳಿನ ಸೀಮಿತ ಜಾಗದಲ್ಲಿ ಗಾಯವಾಗಿರುವುದೇ ಕಾರಣವಾಗಿರುತ್ತಿತ್ತು. ಮೆದುಳಿನಲ್ಲಿಯ ಈ ಜಾಗವನ್ನು ಇವನು ತನ್ನ ಸಂಶೋಧನೆಯಲ್ಲಿ ಕಂಡುಹಿಡಿದನು. ಇದನ್ನೇ ಬ್ರೋಕಾ ಏರಿಯಾ ಎಂದು ಕರೆಯಲಾಗುತ್ತದೆ.

ಮೆದುಳಿನ ಈ ಜಾಗಕ್ಕೆ ಯಾವುದೇ ಗಾಯ ಇಲ್ಲವೇ ಹೊಡೆತದ ಪರಿಣಾಮದಿಂದ ಮಾತಿನ ಕೊರತೆ ಉಂಟಾದರೆ, ಆ ಜಾಗವನ್ನು ಬ್ರೋಕಾ ಅಫೇಸಿಯಾ ಎಂದು ಗುರುತಿಸಲಾಗಿದೆ. ಅಫೇಸಿಯಾ ಎಂಬುದು ಗ್ರೀಕ್ ಪದ, ಮಾತಿನ ಕಸುವನ್ನು (ಸ್ಪೀಚ್‌ಲೆಸ್) ಕಳೆದುಕೊಂಡ ನೆಲೆಯನ್ನು ಇದು ಸೂಚಿಸುತ್ತದೆ. ಸಾವಿರದ ಎಂಟನೂರು ಎಂಬತ್ತೊಂದರಲ್ಲಿ ಮಾತಿನ ಬೇನೆಗೆ (ಅಫೇಸಿಯಾ) ಒಳಗಾಗಿದ್ದ ಒಬ್ಬ ವ್ಯಕ್ತಿಗೆ ಬ್ರೋಕಾ ಚಿಕಿತ್ಸೆಯ (ಸಲಹೆಗಳ)ನ್ನು ನೀಡುತ್ತಿದ್ದನು. ಆ ವ್ಯಕ್ತಿಯನ್ನು ಬ್ರೋಕಾ ‘ತಾನ್’ ಎಂದು ಕರೆದನು.

ಈ ತಾನ್ ತೀರಿಕೊಂಡ ಮೇಲೆ ಬ್ರೋಕಾ ಅವನ ಶವಪರೀಕ್ಷೆ ಮಾಡುತ್ತಾನೆ. ಆವಾಗ ಆ ವ್ಯಕ್ತಿಯ ಎಡಮೆದುಳಿನ ಒಂದು ಜಾಗದಲ್ಲಿ ಗಾಯವಿರುವುದು ಕಂಡುಬರುತ್ತದೆ. ಎಡ ಕಿವಿಯ ಹಾಲೆಯ ಮುಂಭಾಗದ (ಫ್ರಂಟಲ್ ಲೋಬ್) ಮೇಲಿನ ಜಾಗವೇ ಈ ಗಾಯವಿರುವ ಜಾಗವಾಗಿತ್ತು. ಅಂದರೆ ಎಡಮೆದುಳು ನೆಲೆಗೊಂಡಿರುವ ಜಾಗವೆಂದೇ ಹೇಳಬೇಕು.

ಈ ಜಾಗದಲ್ಲಿ ಉಂಟಾಗಿರುವ ಗಾಯವನ್ನು ಬ್ರೋಕಾ ಗುರುತಿಸಿದ್ದಕ್ಕಾಗಿ ಆ ಜಾಗವನ್ನೇ ಬ್ರೋಕಾ (ಜಾಗ) ಏರಿಯಾ ಎಂದು ಕರೆಯುತ್ತಾರೆ. ‘ನುಡಿಯ ಸಾಮರ್ಥ್ಯ ಮಾನವರ ದೇಹದ ಯಾವ ಭಾಗದಲ್ಲಿ ನೆಲೆಗೊಂಡಿರುತ್ತೆ?’ ಮೆದುಳಿನಲ್ಲಿಯೋ? ಇಲ್ಲವೇ ಮನಸ್ಸಿನಲ್ಲೋ? ಎಂಬ ಆವತ್ತಿನ ಕಾಲದ ನುಡಿ ಬಗೆಗಿನ ಚರ್ಚೆಗೆ ಬ್ರೋಕಾನ ಈ ನಿಲುವು, ನುಡಿ ಮೆದುಳಿನಲ್ಲಿಯೇ ನೆಲೆ ನಿಂತಿರುತ್ತದೆ ಎಂಬುದಕ್ಕೆ ಇದೊಂದು ಸಮರ್ಥನೆಯೂ ಆಗಿದೆ ಎಂಬುದನ್ನು ಮನಗಾಣುವುದಕ್ಕೆ ಈ ಸಂಗತಿಯು ಒತ್ತಾಸೆಯಾಗಿದೆ.

ಬ್ರೋಕಾ ಜಾಗದಲ್ಲಿ ಉಂಟಾಗುವ ಬೇನೆಯಿಂದ ಬಳಲುವ ವ್ಯಕ್ತಿ, ನುಡಿಗೆ ಸಂಬಂಧಿಸಿದ ಯಾವ ಬಗೆಯ ತೊಡಕುಗಳನ್ನು ಎದುರಿಸುತ್ತಾನೆ ಎಂಬುದನ್ನು ಬ್ರೋಕಾ ಕಂಡುಹಿಡಿದನು. ನುಡಿಗೆ ಸಂಬಂಧಿಸಿದ ಆ ತೊಂದರೆ ಯಾವುದೆಂದರೆ, ಮಾತನ್ನು ಹೊರಡಿಸುವುದೇ ಆಗಿರುತ್ತದೆ. ಏಕೆಂದರೆ, ಮಾತನ್ನು ಹೊರಡಿಸುವ ಜಾಗವಿರುವುದೇ ಬ್ರೋಕಾ ಏರಿಯಾ. ಇಂತವರಿಗೆ ಸರಾಗವಾಗಿ ಮಾತನಾಡಲು ಸಾಧ್ಯವಾಗುವುದಿಲ್ಲ. ಈ ನೆಲೆಯ ವ್ಯಕ್ತಿಗಳು ಬಹುತೇಕ ಸನ್ನಿವೇಶದಲ್ಲಿ ಮಾತನಾಡುವ ಕಸುವನ್ನೇ ಕಳೆದುಕೊಳ್ಳುತ್ತಾರೆ. ಇದನ್ನು ವರ್ಬಲ್ ಅಪ್ರಾಕ್ಸಿಯಾ [ಮಾತನಾಡದ ನೆಲೆ] ಎಂದು ಕರೆಯುತ್ತಾರೆ.

ಆದರೆ ಬೇರೆಯವರು ಮಾತಾಡುವುದನ್ನು ಇವರು ಅರ್ಥ ಮಾಡಿಕೊಳ್ಳುತ್ತಾರೆ. ಹಾಗೂ ವರ್ಬಲ್ ಅಪ್ರಾಕ್ಸಿಯಾದಿಂದ ಬಳಲುವ ಈ ವ್ಯಕ್ತಿಗಳಿಗೆ ಉಚ್ಚಾರಣೆಯಲ್ಲಿ ತೊಂದರೆಯಾಗುತ್ತದೆ. ಅಂದರೆ ಇವರಿಗೆ ಗಂಟಲು, ಉಲಿಪೆಟ್ಟಿಗೆ, ತುಟಿ, ದವಡೆ ಇವುಗಳ ಮೂಲಕ ಉಚ್ಚರಿಸುವಲ್ಲಿ ಕಷ್ಟವಾಗುತ್ತದೆ. ಸರಿಯಾಗಿ ಪದಗಳನ್ನು ಜೋಡಿಸಿ ಉಚ್ಚರಿಸಲು ಸಾಧ್ಯವಾಗುವುದಿಲ್ಲ. ಮುಖ್ಯವಾಗಿ ಇನ್ನೊಬ್ಬರಿಗೆ ಪ್ರತಿಕ್ರಿಯಿಸುವಾಗ, ಸ್ವಂಪ್ರೇರಿತವಾಗಿ ಏನನ್ನಾದರೂ ಉಚ್ಚರಿಸಬೇಕೆಂದರೆ ಇವರು ತಡಕಾಡುತ್ತಾರೆ.

ಪ್ರತಿಸಲವೂ ಅವರ ಹೊರಡಿಸುವ ಉಲಿಗಳ ವಿಧಾನವೇ ಬೇರೆ ಬೇರೆಯಾಗಿರುತ್ತದೆ. ಇನ್ನೊಬ್ಬರು ಉಚ್ಚರಿಸುವುದನ್ನು ನೋಡಿ ಇವರು ಅನುಕರಿಸಬಹುದಾದರೂ, ಅದು ಯಾವಾಗಲೂ ನಡೆಯುವ ಕೆಲಸವಲ್ಲ. ಇವರಿಗೆ ಗ್ರಹಿಕೆಯಲ್ಲಿ ಸುಮಾರು 50% ರಿಂದ 90% ರಷ್ಟು ನಿಖರತೆ ಇರುತ್ತದೆ. ಆದರೆ ಇದೇ ನಿಖರತೆಯನ್ನು ಪರಸ್ಪರ ಮಾತುಕತೆಗಳಲ್ಲಿ ಎದರು ನೋಡಲು ಸಾಧ್ಯವಿಲ್ಲ. ಇಂತಹ ಸನ್ನಿವೇಶದಲ್ಲಿ ಇವರ ಗ್ರಹಿಕೆಯ ಕಸುವು ಸುಮಾರು 50% ಕ್ಕಿಂತ ಕಡಿಮೆಯಾಗಬಹುದು.

ಹಾಗೂ ಇವರು ಕೇವಲ ನಾಮಪದಗಳನ್ನು ಮಾತ್ರ ಹೊರಡಿಸಬಲ್ಲರು, ಬೇರೆ ಬಗೆಯ ಪದಗಳನ್ನು ಹೊರಡಿಸಲು ಇವರಿಗೆ ಸಾಧ್ಯವಾಗುವುದಿಲ್ಲ. ನಾಮಪದಗಳೊಂದಿಗೆ ಬರುವ ಒಟ್ಟು (ಪ್ರತ್ಯಯ)ಗಳನ್ನೂ ಇವರು ಹೊರಡಿಸಲಾರರು. ಹಾಗೂ ಸೊಲ್ಲರಿಮೆ/ವ್ಯಾಕರಣದ ಅಪೂರ್ಣತೆ (ಅಗ್ರಾöಮ್ಯಾಟಿಕ್) ಮತ್ತು ಟೆಲಿಗ್ರಾಫಿಕ್ ಮಾದರಿಯ ಮಾತುಗಳನ್ನು ಮಾತ್ರ ಆಡುತ್ತಾರೆ. (ಉದಾ.ಗೆಗಾಗಿ, ನಾನು ಮನೆಗೆ ಹೋಗಿ ಊಟ ಮಾಡಿಕೊಂಡು ಬರುತ್ತೇನೆ) ಎಂಬುದನ್ನು ನಾ….ಮನೆ…..ಊಟ…. ಮುಂತಾಗಿ ಹೇಳಬಹುದು. ಬರವಣಿಗೆ ಮತ್ತು ಓದುವ ಚಳಕಗಳನ್ನೂ ಈ ಅಪ್ರಾಕ್ಸಿಯಾ ಬಾಧಿಸುತ್ತದೆ.

ನುಡಿಯ ಉತ್ಪಾದಕತೆಯಲ್ಲಿ ಕೊರತೆಯನ್ನು ಅನುಭವಿಸುವುದೇ ಬ್ರೋಕಾ ಅಫೇಸಿಯಾ. ಈ ಕೊರತೆಗಳು ನುಡಿ ಉತ್ಪಾದಕತೆಯ ಬೇರೆ ಬೇರೆ ನೆಲೆಯಲ್ಲಿಯೂ ಎದುರಾಗುತ್ತವೆ. ಬ್ರೋಕಾ ಏರಿಯಾ ಕುರಿತ ಎಲ್ಲ ವಿವರಗಳನ್ನು ಇಲ್ಲಿ ಚರ್ಚಿಸುವುದು ಸಾಧ್ಯವಿಲ್ಲ. ಸದ್ಯಕ್ಕೆ ಆ ಎಲ್ಲ ವಿವರಗಳನ್ನು ಚರ್ಚಿಸುವ ಅಗತ್ಯವೂ ಇಲ್ಲಿ ಎದ್ದು ಕಾಣುವುದಿಲ್ಲ. ಹಾಗಾಗಿ ಈಗ ಇಲ್ಲಿ ನುಡಿ ನೆಲೆಗೊಳ್ಳುವ ಮೆದುಳಿನ ಇನ್ನೊಂದು ಪ್ರಮುಖ ಭಾಗವಾಗಿರುವ ವರ್ನಿಕ್ ಏರಿಯಾ ಕುರಿತು ಚರ್ಚಿಸೋಣ.

ಕಾರ್ಲ್ ವೆರ್ನಿಕೆ

ಕಾರ್ಲ್ ವೆರ್ನಿಕೆ ಜರ್ಮನಿಯ ನರತಜ್ಞ-ನುಡಿಯರಿಗ. ಇವನು ನುಡಿ ಮತ್ತು ಮೆದುಳಿನ ನಂಟಸ್ತಿಕೆಯನ್ನು ಕುರಿತು ಪೌಲ್ ಬ್ರೋಕಾ ನಂತರ ಚಿಂತಿಸಿದವರಲ್ಲಿ ಮತ್ತೊಬ್ಬ ಬಹುದೊಡ್ಡ ಚಿಂತಕ. ಇವನು ಬ್ರೋಕಾ ಏರಿಯಾ ಹಾಗೂ ಮಾತಿನ ಕೊರತೆಯನ್ನು ಕುರಿತು ತನ್ನ ಸಂಶೋಧನಾ ತೀರ್ಮಾನಗಳನ್ನು ಪುಸ್ತಕೆ ರೂಪದಲ್ಲಿ ಪ್ರಕಟಿಸಿದನು. ಇದರಿಂದ ಇವನು ಲೋಕದಾದ್ಯಂತ ಹೆಸರುವಾಸಿಯಾದನು.

ತನ್ನ ಈ ಸಂಶೋಧನೆಯನ್ನು ಮುಂದುವರಿಸುತ್ತಿರುವ ಸಂದರ್ಭದಲ್ಲಿಯೇ ವೆರ್ನಿಕೆ ಒಂದು ಮುಖ್ಯವಾದ ಸಂಗತಿಯನ್ನು ಕಂಡುಕೊಂಡನು. ಅದೇನೆಂದರೆ, ಕೇವಲ ಬ್ರೋಕಾ ಏರಿಯಾಗೆ ಒದಗುವ ತೊಂದರೆಯ ಪರಿಣಾಮದಿಂದ ಮಾತ್ರ ಎಲ್ಲ ಬಗೆಯ ನುಡಿ ಕೊರತೆಗಳು ಉಂಟಾಗುವುದಿಲ್ಲ, ಮೆದುಳಿನ ಮತ್ತೊಂದು ಜಾಗದಲ್ಲಿ ಆಗುವ ತೊಂದರೆಯಿಂದಲೂ, ಮಾನವರು ಮಾತಿನ ಕೊರತೆಯನ್ನು ಎದುರಿಸುತ್ತಾರೆ ಎಂಬ ಸಂಗತಿಯನ್ನು ಕಂಡುಹಿಡಿದನು.

ಹಾಗಾದರೆ ವೆರ್ನಿಕೆ ಕಂಡುಕೊಂಡ ನುಡಿ ಕುರಿತ ಕೊರತೆಗಳು ಎಂತಹವು? ಕಾರ್ಲ್ ವೆರ್ನಿಕೆ ಕಂಡುಹಿಡಿದ ಆ ಜಾಗವು ಬ್ರೋಕಾ ಏರಿಯಾಕ್ಕಿಂತ ಕೊಂಚ ಹಿಂದುಗಡೆ ಇರುತ್ತದೆ. ಅಂದರೆ ಆಡಿಟರಿ ಕರ‍್ಟೆಕ್ಸ್ಗೆ ಹೊಂದಿಕೊಂಡಿರುತ್ತದೆ. ಇದನ್ನು ಮೆದುಳಿನ ಎಡ ಹಿಂಭಾಗವೆಂದು (ಟೆಂಪರಾಲ್ ಲೋಬ್) ಹೇಳಬಹುದು. ಮಾನಸಿಕ ನ್ಯೂನತೆಯ ಕಾರಣದಿಂದ ಮೆದುಳಿನ ಬೇರೆ ಬೇರೆ ಜಾಗಗಳಲ್ಲಿ ಯಾವ ಬಗೆಯ ಮಾತಿನ ಕೊರತ (ಅಫೇಸಿಯಾ)ಗಳು ಉಂಟಾಗುತ್ತವೆ ಎಂಬುದನ್ನು ತನ್ನ ಶೋಧಗಳಿಂದ ವೆರ್ನಿಕೆ ತೋರ್ಪಡಿಸಿದ್ದಾನೆ.

ಆ ಶೋಧಗಳಿಂದ ಮಾತಿನ ಬೇರೆ ಬಗೆಯ ತೊಂದರೆಗಳು ಯಾವವು ಎಂಬುದನ್ನು ವೆರ್ನಿಕೆ ಗುರುತಿಸಿದ್ದಾನೆ. ಈ ವೆರ್ನಿಕೆ ಅಫೇಸಿಯಾದಿಂದ ಬಳಲುವವರ ಉಚ್ಚಾರಣೆಗಳು ಸರಿಯಾಗಿದ್ದು, ಸೊಲ್ಲರಿಮೆಗೆ ಒಪ್ಪಿತವಾದ ಸೊಲ್ಲುಗಳನ್ನೇ ಉತ್ಪಾದಿಸುತ್ತಿದ್ದರೂ, ಅರ್ಥಗಳನ್ನು ಒದಗಿಸು ನೆಲೆಗಳು ಮಾತ್ರ ಸರಿಯಾಗಿರುವುದಿಲ್ಲ. ಹಾಗೂ ಬೇರೆಯವರು ಮಾತಾಡಿದ್ದನ್ನು ಇವರಿಗೆ ಅರ್ಥ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ಮಾತನ್ನು ಉತ್ಪಾದಿಸುವ ನೆಲೆ ಇವರಿಗೆ ಸರಿಯಾಗಿದ್ದರೂ, ಅರ್ಥಗಳನ್ನು ಒದಗಿಸುವ ಹಾಗೂ ಅರ್ಥಗಳನ್ನು ಪಡೆಯುವ ನೆಲೆಯಲ್ಲಿ ಇವರು ತೊಂದರೆಗಳನ್ನು ಎದುರಿಸುತ್ತಾರೆ.

ನಮ್ಮ ಮೆದುಳಿನಲ್ಲಿ ಉಲಿ ಮತ್ತು ಆರ್ಥಗಳನ್ನು ಕೊಡಿಟ್ಟುಕೊಂಡು ಮತ್ತೆ ಅವುಗಳನ್ನು ನಮ್ಮ ಬಳಕೆಗೆ ಒದಗಿಸುವ ಜಾಗಗಳು ಬೇರೆ ಬೇರೆ ಎಂಬುದನ್ನು ಮೇಲಿನ ಚರ್ಚೆಗಳಿಂದ ನಿಚ್ಚಳವಾಗಿ ಕಾಣುತ್ತದೆ. ಅವುಗಳನ್ನು ಬ್ರಾಕಾ ಜಾಗ (ಏರಿಯಾ) ಮತ್ತು ವೆರ್ನಿಕೆ ಜಾಗವೆಂದು ಗುರುತಿಸಲಾಗಿದೆ. ಈ ಎರಡು ಜಾಗಗಳಲ್ಲಿ ಯಾವುದೇ ಒಂದಕ್ಕೆ ತೊಂದರೆಯಾದರೂ ನುಡಿಯನ್ನು ಸರಾಗವಾಗಿ ಸಂವಹಿಸಲು ಸಾಧ್ಯವಿಲ್ಲ. ಹಾಗಾಗಿ ಈ ಎರಡೂ ಜಾಗಗಳು ನುಡಿ ಗಳಿಕೆ ಹಾಗೂ ಬಳಕೆಯ ನೆಲೆಯಿಂದ ತುಂಬಾ ಮುಖ್ಯವಾಗಿವೆ.

  • ಉಲಿ ಪೆಟ್ಟಿಗೆಗೆ (ಪದಗಳನ್ನು ಹೇಳುತ್ತೇವೆ)
  • ಮೋಟಾರ್‌ಕೋರಟೆಕ್ಸ್ (ಕ್ರಿಯೆಗಾಗಿ)
  • ಬ್ರೋಕಾನ ಜಾಗಕ್ಕೆ (ಉಲಿಗಳಿಗಾಗಿ)
  • ವೆರ್ನಿಕ್‌ನ ಜಾಗಕ್ಕೆ (ಅರ್ಥಗಳನ್ನು ಒದಗಿಸುವ/ಗಳಿಸುವ)
  • ಪ್ರೈಮರಿ ವಿಸ್ಯುಯಲ್ ಕೊರಟೆಕ್ಸ್ ಟು ಪ್ರೈಮರಿ ಆಡಿಟರಿ ಏರಿಯಾ (ನಾವು ನೋಡುವ ಪದ) (ನಾವು ಕೇಳುವ ಪದ)
  • ನೋಡುವ ಪಠ್ಯ (ಕಣ್ಣಿನ ನುಡಿ)
  • ಕೇಳು ಉಲಿಗಳು (ಕಿವಿಯ ನುಡಿ)

ನಾವು ಜೋರಾಗಿ ಓದುವಾಗ ಕೇಳಿದ ಪದವನ್ನು ಮರುಬಳಿಸುವ

ಚಿತ್ರ – 01 : ವೆರ್ನಿಕೆ-ನರ‍್ಮನ್ ಗೇಶ್ಚ್ವಿಂಡ್ ಅವರ ಸರಳೀಕರಿಸಿದ ಮಾದರಿ
ಈ ಮೇಲಿನ ಚಿತ್ರ ನುಡಿಯನ್ನು ನಾವು ಹೇಗೆ ಗ್ರಹಿಸುತ್ತೇವೆ, ಓದುತ್ತೇವೆ ಹಾಗೂ ಹೇಳುತ್ತೇವೆ ಹಾಗೂ ಈ ಕೆಲಸ ಮೆದುಳಿನ ಮೂಲಕ ಹೇಗೆ ನಡೆಯುತ್ತದೆ ಎಂಬುದನ್ನು ತೋರಿಸುತ್ತದೆ. ಈ ಮಾದರಿ ನುಡಿ ಮತ್ತು ಮೆದುಳುಗಳ ನಡುವಣ ನಂಟಸ್ತಿಕೆಯ ಹೊಸ ಆಯಾಮಗಳನ್ನು ತೋರಿಸುತ್ತದೆ. ನುಡಿ ಮೆದುಳಿನಲ್ಲಿ ಯುಕ್ತತೆಯಿಂದ ನೆಲೆಗೊಂಡಿರುತ್ತದೆ.

ಬ್ರಾಕಾ ಜಾಗವು ಆಡಿಟರಿ ಮತ್ತು ಮೋಟಾರ್ ಕರ‍್ಟೆಕ್ಸ್ಗಳಗೆ ಹೊಂದಿಕೊಂಡಿರುತ್ತದೆ. ಈ ಆಡಿಟರಿ ಕರ‍್ಟೆಕ್ಸ್ ಕಿವಿಯ ಮೂಲಕ ಬರುವ ಸಂಕೇತಗಳನ್ನು ಪಡೆಯುತ್ತದೆ. ಹಾಗೂ ಮೋಟಾರ್ ಕರ‍್ಟೆಕ್ಸ್ನಿಂದ ಸಂಕೇತಗಳು ಮೆದುಳಿನ ಗ್ರಂಥಿಗಳಿಗೆ ಹೋಗುತ್ತವೆ. ಅಲ್ಲಿಂದ ನಮ್ಮ ಎಲ್ಲ ನುಡಿಗೆ ಸಂಬಂಧಿಸಿದ ಚಟುವಟಿಕೆಗಳು ಶುರುವಾಗುತ್ತವೆ. ಉಲಿ ಸಂಕೇತಗಳು ಉಲಿಪೆಟ್ಟಿಗೆಗೆ ಕೂಡ ಇದೇ ಜಾಗದಿಂದ ಹೊರಹೊಮ್ಮುತ್ತವೆ. ಈ ಕೇಳಗಿನ ಎರಡೂ ಚಿತ್ರಗಳು ಇನ್ನಷ್ಟೂ ವಿವರವಾಗಿ ನುಡಿ ಹಾಗೂ ಮೆದುಳಿನ ನಡುವಣ ನಂಟಸ್ತಿಕೆಯನ್ನು ತಿಳಿಸುತ್ತವೆ.

ಈ ಮೇಲಿನ ಎಲ್ಲ ಚರ್ಚೆಗಳು ಕೇವಲ ನುಡಿ ಎಂದರೇನು ಎಂಬ ಕೇಳ್ವಿಗೆ ಬದಲುಗಳನ್ನು ಕೊಡುವುದಕ್ಕೆ ಮಾತ್ರ ಸೀಮಿತಗೊಳ್ಳದೇ, ನುಡಿ ಸ್ವರೂಪದ ಬೇರೆ ಬೇರೆ ನೆಲೆಗಳನ್ನು ತಿಳಿಯುವ ಯತ್ನವನ್ನು ಮಾಡಲಾಗಿದೆ. ಆ ಮೂಲಕ ಇಲ್ಲಿಯ ಚರ್ಚೆಗಳು ನುಡಿಯ ಬೇರೆ ಬೇರೆ ಆಯಾಮಗಳನ್ನು ಚರ್ಚಿಸುವುದಷ್ಟೆ ಅಲ್ಲ, ಬದಲಾಗಿ ನುಡಿ ಕುರಿತ ಭಿನ್ನ ಕಣ್ನೋಟಗಳನ್ನು ತೋರ್ಪಡಿಸುತ್ತವೆ. ನುಡಿಯರಿಮೆಗೆ ನುಡಿಯ ಯಾವ ನೆಲೆಗಳು ಅತ್ಯಂತ ಮಹತ್ವ ಸಂಗತಿಗಳು ಅನ್ನುವ ನಿಲುವುಗಳನ್ನೂ ಈ ಟಿಪ್ಪಣಿಯಲ್ಲಿ ಗಮನಿಸಲು ಸಾಧ್ಯವಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

ಕತೆ | ಮಾಯಮ್ಮ

Published

on

~ತೆಲುಗು ಮೂಲ: ಡಾ.ವೇಂಪಲ್ಲಿ ಗಂಗಾಧರ್,ಕನ್ನಡಕ್ಕೆ: ಡಾ.ಶಿವಕುಮಾರ್ ಕಂಪ್ಲಿ

ʼಆಗಸದ ತುಂಬಾ ಕಪ್ಪನೆಯ ದಟ್ಟ ಮೋಡಗಳು ಕವಿದುಕೊಂಡಿವೆ. ಮೋಡ ಮೋಡಗಳು ಬಸೆದುಕೊಂಡು ಗುಡುಗು ರ‍್ಜಿಸುತ್ತಿದೆ. ಗುಡುಗು ಗುಡುಗುಗಳನ್ನು ಹೊತ್ತಿಕೊಂಡು ಮಿಂಚುಗಳು ಮಿನುಗುತ್ತಿವೆ. ಮಿಂಚು ಮಿಂಚುಗಳು ಹೊಸೆದುಕೊಂಡು ಬೆಂಕಿಸುರಿಸುತ್ತಿವೆ.ಆ ಸೆಕೆಗೆ ಕಪ್ಪುಮೋಡ ಕದಲಿಹೋಗುತ್ತಿದೆ. ಹೊಡೆದುಕೊಂಡು ಹೋಗುತ್ತಿದೆ. ಹೊಗೆಯನ್ನು ತಗಲಿಸಿಕೊಂಡು ಬೋಂಕನೆ ಸರಿಯುತ್ತಿದೆ. ನಕ್ಕನ್‌ ಕರೇಮೋಡ. ಈ ಗಡ್ಡೆಮ್ಯಾಕೆ ಸುರಿಬೇಕಂದರೆ ಈ ಮಾಡಗಳಿಗೆ ಏನು ಮಾಡಬೇಕೋ. ನಮ್ಮ ನೆತ್ತಿಯ ಮೇಲೆ ಬರವನ್ನು ಹಾಕಿ ಎಲ್ಲಿಗೋ ಮಳೆಗಳನ್ನ ಓಡಿಸಿಬಿಡುತ್ತವೆ. ಈ ಮಾಡಗಳಿಗೆ ಅದೇಟು ತೀಟಿ…” ವೀರಶಿವ ಬೈದುಕೊಳ್ಳುತಿದ್ದಾನೆ ಮಾಯಮ್ಮನ ಗುಡಿಯ ಪಡಸಾಲೆಯೊಳಗೆ ಉದ್ದಕೆ ಮಲಗಿಕೊಂಡು.
ಕಪ್ಪನೆಯ ಶರೀರ. ಮಾಸಿದ ಗಡ್ಡ. ಹರಿದುಹೋಗಿರುವ ಬಟ್ಟೆಗಳು. ಕೈಯೊಳಗೊಂದು ಬಿದುರು ಕೋಲು. ಹೆಗಲ ಮೇಲೊಂದು ಜೋಳಿಗೆ. ಧೂಳ ಕಾಲಿನ ಮೇಲೊಂದು ಕುರ ಅದಕ್ಕೆ ಮುತ್ತಿಕೊಳ್ಳುತ್ತಿರುವ ನೊಣದ ಹಿಂಡು, ಇವು ತಿಕ್ಕ ಶಿವನ ಆಕಾರ. ಯಾವಾಗಲೂ ಮಾಯವ್ವನ ಗುಡಿಯ ಹತ್ತಿರವೇ ಇರುತಾನೆ. ಹೊಟ್ಟೆ ಹಸಿದಾಗ ಮಾತ್ರವೇ ಎದ್ದು ಹಳ್ಳಿಗಳ ಒಳಗೆ ಬಂದು ಯಾರೋ ಒಬ್ಬರ ಮನಿಯೊಳಗೆ ಕುಂತು ಅಷ್ಟು ಜೋಳಿಗಿಯೊಳಗೆ ಹಾಕಿಸಿಕೊಂಡು ಹೋಗಿ ಆ ಗುಡಿಯ ಒಳಗೇ ಕುಂತು ತಿನ್ನುತ್ತಾನೆ. ಕಾಲುವೆಯೊಳಗೆ ಹರಿವ ನೀರನ್ನು ಬಾಯಿಗಚ್ಚಿಕೊಂಡೇ ಕುಡಿತಾನೆ. ಹಂಗೇ ಆತನ ಬದುಕೆಲ್ಲಾ ಕಳೆದು ಹೋಗುತ್ತಿದೆ.

ಆಕಾಶವೆಂದರೆ ಕೋಪ. ಮೋಡಗಳೆಂದರೆ ಕೋಪ. ಬೆಳೆಗಳೆಂದರೆ ಕೋಪ. ವ್ಯವಸಾಯವೆಂದರೆ ಕೋಪ. ನಂಬಿಕೊಂಡ ದೇವರೆಂದರೆ ಕೋಪ. ಅದುಕ್ಕೇ ಮಾಯವ್ವ ತಾಯಿಗೆ ಅರಿಷಿಣ ಕುಂಕುಮದ ಬದಲು ಮಸಿಬಳಿಯುತ್ತಾನೆ. ಆ ಗುಡಿ ಹತ್ರ ಆ ತಾಯಿಗೆ ಪೂಜೆಗಳಿಲ್ಲ ಪುನಸ್ಕಾರಗಳಿಲ್ಲ. ದೇವರ ವಿಗ್ರಹವೂ ಕೊಂಚ ಮುಕ್ಕಾಗಿದೆ. ಬಾವಲಿಗಳು ಸೇರಿಕೊಂಡಿವೆ. ಹೊಲಸು ನಾತ ಹೊಡೆಯುತ್ತದೆ. ಅಂತಹ ಗುಡಿಯಲ್ಲೇ ತಿಕ್ಕ ಶಿವಪ್ಪ. ಆ ತಾಯಿಗೆ ಬಾಯಿಗೆ ಬಂದಂಗೆ ಬೈಯುತ್ತಾ ಇರುತ್ತಾನೆ.
ತಿಕ್ಕ ಶಿವಪ್ಪನೆಂದರೆ ನಮ್ಮ ಹಳ್ಳಿಯೊಳಗೆ ಎಲ್ಲರಿಗೂ ಅಭಿಮಾನ. ದೊಡ್ಡ ದೊಡ್ಡವರೆಲ್ಲಾ ಕೈಯೆತ್ತಿ ಮುಗಿಯುತ್ತಾರೆ.

ಆತ್ಮೀಯತೆಯಿಂದ ಆದರಿಸುತ್ತಾರೆ. ಅತ ಬಂದು ಕೇಳಬೇಕೇ ವಿನಃ ಆಸ್ತಿಗಳನ್ನಾದರೂ ಕೊಟ್ಟುಬಿಡುತ್ತಾರೆ. ಆತನಿಗಿರುವ ಹೆಸರು ಅಂತಾದ್ದು. ತಿಕ್ಕ ಶಿವನೆನ್ನೋ ಹೆಸರು ಕೂಡಾ ಅಮಾಯಕವಾಗಿ ಮಕ್ಕಳು ಮಾತಾಡಿಕೊಳ್ಳೋದು. ʼವೀರ ಶಿವʼ ಅಂತಾ ಬಾಯತುಂಬಾ ಕರೆಯಬೇಕೆಂದರೆ ಎಲ್ಲರಿಗೂ ಪರಮಾನ್ನ ತಿನ್ನುವಷ್ಟು ಇಷ್ಟ. ಆಗ… ಆಗ್ಯಾವಾಗಲೋ.. ನಾನು ಸಣ್ಣವನಿದ್ದಾಗಿನ ದಿನದೊಳಗೆ ವೀರ ಶಿವನ ಸಾಹಸಗಳ ಕುರಿತು ಕತೆ ಕತೆಗಳಾಗಿ ಹೇಳುತಿದ್ದರು. ಆ ಕಥೆಗಳೆಲ್ಲವೂ ಜ್ಞಾಪಕಕ್ಕೆಬರುತ್ತಿವೆ…
***
ದಿನಾ ರಾತ್ರಿ ಹೊತ್ತಿಗೆ ದೊಡ್ಡ ಹುಲಿ ಬರುತಾತೆಂದು ಹಳ್ಳಿಯ ಜನ ಭಯಬೀಳುತಿದ್ದರೆ ಆ ವಿಷಯವು ಚಿಕ್ಕ ವೀರಶಿವನಿಗೆ ಒಂದು ದಿನ ತನ್ನ ಜೊತೆಗಾರರನ್ನು ಹಿಂದಾಕಿಕೊಂಡು ಬೆಟ್ಟದ ಮಲ್ಲಪ್ಪನ ಗುಡ್ಡದ ಬಯಲಿಗೆ ಹೊಂಟನು. ಕಣವಿಹಳ್ಳಿ ಅಡವಿಯೊಳಗಿಂದ ದಾಟಿಕೊಂಡು ಕುಮಾರನ ಹಳ್ಳಿ ದಿಕ್ಕಿಗೆ ತಿರುಗಿದನು.ಏಳು ಮೆಟ್ಟಿನ ಹುಲಿಬೇಟೆಗೆಂದು ತಿಳಿದರೆ ಯಾರೂ ಹಿಂದೆ ಬರಲಾರರೆಂದು ಮೊಲದ ಬೇಟಿಗೆ ಹೋಗಾನ ರ‍್ರಿ ಅಂತ ನಂಬಿಸಿದ್ದನು. ನಡು ರಾತ್ರಿತಂಕಾ ಮಲ್ಲಪ್ಪನ ಗುಡ್ಡಕ್ಕೆ ಸೇರಿಕೊಂಡು ಅಲ್ಲಿಂದ ಅಡ್ಡದಾರಿಗುಂಟಾ ಮಲ್ಲಪ್ಪನ ಗುಡ್ಡದ ಬಯಲ ಕಡೆಗೆ ಸೇರಿದರು.
ಕೈಯೊಳಗಿನ ನಾಡ ಬಂದೂಕು ಹಸಿದ ಕಣ್ಣು ಬಿಡುತ್ತಿದೆ. ಬಂಡೆಗಲ್ಲಿನ ಮೇಲೇರಿ ಕೆಳಗೆ ನೋಡುತಿದ್ದಾನೆ ವೀರಶಿವ. ಸಣ್ಣಗೆ ಪೊದೆಯೊಳಗಿನ ಎಲೆಗಳು ಅಲುಗಿದಂಗಾಯಿತು. ಜೊತೆಗಾರರು ಬೆದರಿ ಗುಡ್ಡದ ಮೇಲಕ್ಕೆ ಏರತೊಡಗಿದರು. ವೀರ ಶಿವ ತುಪಾಕಿಯನ್ನು ಸರಿಮಾಡಿಕೊಂಡನು. ಗುರಿ ಕುದುರಿತು. ನೋಟದೊಳಗೆ ಏನೋ ಅನುಮಾನ ಕಾಣಿಸಿತು. ತಡೆದನು. ಲಾಟೀನಿನ ಬುಡ್ಡಿ ದೀಪವನ್ನ ಸ್ವಲ್ಪ ಮೇಲೆತ್ತಿರೆಂದು ಹಿಡಿದುಕೊಳ್ಳಿರೆಂದು ಹೇಳಿದನು. ಪರೀಕ್ಷೆಯಿಂದ ಮರದ ಕಡೆಗೆ ನೋಡಿದನು. ಬಂಡೆ ಇಳಿಯಲು ಪ್ರಾರಂಭಿಸಿದನು. ಎಲ್ಲರೂ ಬ್ಯಾಡಾ ಅಂದರು. ಆದರೂ ಕೇಳದಂತೆ ಹೆಜ್ಜೆಯ ಸಪ್ಪಳ ಕೇಳದಂತೆ ಮರಗಳ ಕೆಳಗೆ ಹೋಗಿ ಸ್ವಲ್ಪ ಬಗ್ಗಿಕೊಂಡು ಎರಡು ಕೈಗಳಿಂದ ಅವಚಿಕೊಂಡನು. ದಾರಿ ಬಳಿ ಜಿಂಕೆ ಮರಿ ಕೊಸರಾಡುತ್ತಿದೆ. ಆಕಡಿಗೆ ಈ ಕಡಿಗೆ ಅದು ತಪ್ಪಿಸಿಕೊಳ್ಳಬೇಕೆಂದು ಕೊಸರಾಡುವುದನ್ನು ನೋಡಿ ಕೈಯೊಳಗಿದ್ದ ಹಗ್ಗದಿಂದ ಅದರ ಎರಡು ಕಾಲು ಕಟ್ಟಿ ಅಲ್ಲೇ ವಗೆದನು. ಅದು ಅರಚುತ್ತಲೇ ಇದೆ. ಅಲ್ಲಿಂದ ಚಕ ಚಕನೇ ಗುಡ್ಡದ ಬಂಡೆಯನ್ನೇರಿದನು. ನಾಡ ಬಂದೂಕನ್ನು ಕೈಯೊಳಗೆ ತೆಗೆದುಕೊಂಡನು. ಜಿಂಕೆ ಮರಿಯ ಕಡೆಗೆ ಗುರಿ ಇಟ್ಟುಕೊಂಡು ಹೊಂಚಿಕೊಂಡು ಕುಳಿತನು. ಆ ಜಿಂಕೆ ಮರಿ ಅಡವಿಯೆಲ್ಲಾ ಅದುರುವಂತೆ ಮೊರೆಯುತ್ತಲೇ ಇದೆ.

ಲಾಟೀನು ಬುಡ್ಡಿಯ ಬೆಳಕನ್ನು ಇಳಿಸಿದನು. ಜೊತೆಗೆ ಬಂದವರೆಲ್ಲಾ ಬೆದರಿ ಮುದುರಿಕೊಂಡು ಏನು ನಡೆಯುತ್ತಿದಿಯೋ ಏನೋ ಎಂದು ನೋಡುತಿದ್ದಾರೆ. ಬಂದೂಕು ಜಿಂಕೆ ಮರಿಯ ಕಡೆಗೇ ಇದೆ. ಜಿಂಕೆಯ ಕೂಗು ಹೆಚ್ಚಾಯಿತು. ಒಂದೇ ಸಾರಿಗೆ ಸಾವಿನ ಕೂಗು ಕೂಗಿತು. ವೀರಶಿವನ ಕೈಯೊಳಗಿನ ಬಂದೂಕು ರ‍್ಜಿಸಿತು. ತೋಟ ತೂರಿ ನುಗ್ಗಿಹೊರಟಿತು. ಹುಲಿ ಎಗರಿಬಿತ್ತು. ಹುಲಿ…ಹುಲಿ… ಜಿಂಕೆಗಾಗಿ ಬಂದಿತ್ತು. ವೀರಶಿವನ ಗುರಿ ಗೆದ್ದಿತು. ಆ ಕ್ಷಣದಲ್ಲೇ ಹಗ್ಗದ ಮೊಲಕು ಬಿಡಿಸಿಕೊಂಡ ಜಿಂಕೆ ಅಷ್ಟೇ ಹೆದರಿಕೆಯಲ್ಲಿ ಜಿಗಿದು ಹಾರಿ ಪೊದೆಯೊಳಗೆ ತೂರಿಹೋಯಿತು. ಗುಡ್ಡ ನಾಲ್ಕು ಹೆಜ್ಜೆ ಇಳಿದು ಮತ್ತೆ ಬಂದೂಕನ್ನು ಸರಿಪಡಿಸಿಕೊಂಡು ಕೆಳಗೆ ಬಿದ್ದು ವಿಲವಿಲನೇ ವದ್ದಾಡುತಿದ್ದ ಹುಲಿಯನ್ನು ಗುರಿಯಿಟ್ಟು ಮತ್ತೆ ಹೊಡೆದನು. ಅದು ರ‍್ಜಿಸುತ್ತಾ ವದ್ದಾಡಿ ಸತ್ತಿತು. ಇದನ್ನೆಲ್ಲಾ ಗದಗದನೇ ನಡುಗುತ್ತಾ ನೋಡುತಿದ್ದ ಜೊತೆಗಾರರೆಲ್ಲಾ ಅಂಗೇ ಕೇಕೆ ಹಾಕಿದರು. ಇದು ಪರಶಿವನ ಬೇಟೆಯ ಕಥೆ.
ಹುಲಿಯನ್ನು ಹೊಡೆದನೆಂದು ಊರೆಲ್ಲಾ ತಿಳಿದಮೇಲೆ ಎತ್ತನ ಬಂಡಿಯಮೇಲೆ ಸತ್ತ ಹುಲಿಯನ್ನೂ, ವೀರ ಶಿವನನ್ನೂ ಕೂರಿಸಿ ಮೆರವಣಿಗೆ ಮಾಡಿದರು ಊರಜನ. ಸುತ್ತು ಮುತ್ತಲ ಅರವತ್ತು ಹಳ್ಳಿಗಳವರೂ ಬಂದು ಹಬ್ಬ ಮಾಡಿದರು.ಆ ಹುಲಿ ರ‍್ಮ ತೆಗೆದು ರ‍್ಪದಿಂದ ಪರಶಿವನ ಮನೆಗೆ ನೇತು ಹಾಕಿದರು.ಹುಲಿಯುಗುರು ತೆಗೆದು ಬಂಗಾರದ ಸರಕ್ಕೆ ಹಾಕಿಕೊಂಡರು.
***
ಪರಶಿವನ ವಿವಾಹ ನಿಶ್ಚಯವಾಯಿತು. ಕರವಾಗಿ ಮಾವನಿಗೆ ಕೊಮಾರನ ಹಳ್ಳಿ ತಾಂಡಾದ ಬಳಿಯ ಬೆದ್ದಲು ಭೂಮಿಯನ್ನು ನೀಡಿದನು. ವಿವಾಹದ ದಿನ ವಧು ಪರ‍್ವತಿಗೆ ಏಳು ಗಜದ ರೇಷಿಮೆ ಸೀರಿ,ಝರಿ ರವಿಕೆ, ಬಂಗಾರದ ಬಳೆಗಳು,ಮೂಗು ನತ್ತು,ಬುಗುಡಿ,ಬೆಂಡೋಲಿ,ತೀಕಿ,ನಾಗರ,ಬೆಳ್ಳಿ ಡಾಬು, ಏಳುವರಹದ ವಡವೆಗಳು ಎಲ್ಲಾ ಪರಶಿವನೇ ಕನ್ನೆಗೆ ಇತ್ತನು.
“ ಬರಗಾಲವು ಕಿತ್ತು ತಿನ್ನುವಾಗ ಇದೇನಪೋ ಮದುವಿ” ಎಂದರು ಸರೀಕರು.
“ ನಮ್ಮೂರ ಗೌಡಪ್ಪನ ಮದುವಿ ನಾವು ಘನವಾಗೇ ಮಾಡಿಕೊಳ್ಳತೀವಿ” ಅಂದು ಆಕಾಸದಂಗ ಹಂದರ ಹಾಕಿ,ಊರೆಲ್ಲಾ ರಂಗೋಲಿ ಬಿಟ್ಟು,ದೊಡ್ಡ ಊರ ಹಬ್ಬದಂತೆ ಹನ್ನೆರಡು ದಿನಗಳ ಮದುವಿ ಮಾಡಿದರು. ಸುತ್ತು ಹಳ್ಳಿಗಳೂ ಸಂಭ್ರಮದಿಂದ ಕುಣಿದವು.
ಮದುವಿ ಹೆಣ್ಣು ಪರ‍್ವತಿ ಅದೆಷ್ಟು ಅದೃಷ್ಟವಂತಳೋ..!? ಎಂದು ಊರೆಲ್ಲಾ ಗಲಗಲನೇ ಅಂದುಕೊಂಡರು. ಅದೇನು ಗಾಚಾರನೋ…ಆಯಮ್ಮನು ಊರೊಳಗೆ ಕಾಲಿಟ್ಟೊಡನೆಯೇ ಬರವು ಬೆನ್ನುಬಿದ್ದಿತು. ಮನಿ ಮನಿಗೆ ಅರಿಷ್ಟವು ಬಡಿಯಿತು. ಬಾವಿಗಳೆಲ್ಲಾ ಒಣಗಿ ಹೋಗಿ, ಹಳ್ಳಗಳೆಲ್ಲಾ ಇಂಗಿ ಹೋಗಿ, ಊರು ನಂಬಿದ ಚಿನ್ನದ ಹಗರಿ ಎಂಬ ಕಿರು ನದಿಯು ಒಣಗಲು ಶುರುವಾಗಿದೆ. ಅವ್ವನ ಜಾತ್ರೆಯ ದಿನ ಮಾಯವ್ವನಿಗೆ ಬೋನಗಳ ಎಡೆ ಇಟ್ಟರು,ಅಂಗಳದಲ್ಲಿ ಕುರಿಕೋಣ,ಆಡು ಕೋಳಿಗಳೆಂಬೋ ನೂರಾರು ಜೀವಿಗಳ ರಕ್ತದ ಮುಖಗಳನ್ನ ಚಲ್ಲಿ, ಬಂಡಿಗಳ ಕಟ್ಟಿ, ಸಿಡಿಗೆ ತೋರಣಗಳನ್ನು ಕಟ್ಟಿಸಿದ್ದಾರೆ. ಗುಡಿಯಲ್ಲಿ ತಾಯಿಮರ‍್ತಿಗೆ ಬೆಳ್ಳಿಯ ಮುಖ,ಕಣ್ಣು,ಕೋರೆಗಳ ಮಾಡಿ ಇಟ್ಟಿದ್ದಾರೆ. ಜಾತ್ರಿಯ ಪೂಜಿ ಜೋರಾಗಿ ನಡೆಯುತ್ತಿದ್ದಾಗಲೇ ತಳವಾರ ಲಕ್ಷ್ಮಿಯ ಮೈಮ್ಯಾಲೆ ಆ ಮಾಯವ್ವ ತಾಯಿ ಮೈದುಂಬಿ ಬಂದಳು…
“ಅಲಲಲಲ ಮಕ್ಕಳೇ…ನಾನು ಯಾರು!?
ಈ ಭೂಮಿ ಆಕಾಶ ಹುಟ್ಟಿದಾಗಿಂದಲೂ…
ಮಹಾಶಕ್ತಿ; ಲೋಕ ಮಾತೆ
ಆದಿಶಕ್ತಿ ; ಲೋಕ ಮಾತೆ
ಕಾಲ ಮೀರಿದವಳು ಗುಡುಗು,ಸಿಡಿಲು,ಗಾಳಿ,ಮಳೆ,ಮುಗಿಲು..
ಈಗ ಒಂದು ಪಕ್ಷಿಯಾಗಿ ಹುಟ್ಟಿ…
ಕೂರಬೇಕೆಂಬ ತಾವು ಸಿಗದಾಗಿ…..
ಕಲ ಕಲನೆ ಗಾಳಿ ಗಾಳಿಯಾಗಿ ಅಂತರ ಅಂತರವಾಗಿ ಆಡುತ್ತಾ…
ಮಹಾ ಬಲಿದಾನವನ್ನ ಕೋರುತ್ತಿದೆ….” ಎಂದು ಹೇಳಿ ದೇವಾಲಯದ ಸುತ್ತಾ ಕಾರ ಮತ್ತು ಮಣ್ಣು ಚಲ್ಲುತ್ತಾ ತಿರುಗಿದಳು. ಜಾತರೆಯು ಪರ‍್ತಿಯಾಯಿತು. ಆದರೆ ಆ ತಾಯಿ ಶಾಂತಿಯಾಗಲಿಲ್ಲವೆಂದು ತಿಳಿದುಹೋಯಿತು.

ಹಸಿರು ಮರಗಿಡಗಳು ಒಣಗಿ ಹೋಗಿವೆ. ಎಲ್ಲಿಯೂ ಕೂಡಾ ಹನಿ ನೀರಿರದ ಪರಿಸ್ಥಿತಿ. ಬರಗಾಲ …ಬರಗಾಲಕ್ಕೆ ಕಾರಣ ಆಯಮ್ಮ ಪರ‍್ವತಿಯೇ…
“ಎಲ್ಲಿಂದಲೋ ಇಲ್ಲಿಗೆ ಸೊಸೆಯಾಗಿ ಬಂದಳು.ಇದೆಲ್ಲವೂ ಆಯಮ್ಮನ ಕಾಲ್ಗುಣವೇ ಎಂದು ಕೆಲವರು ಹೇಳಿದರೆ, ಅದೇನಿಲ್ಲ ಬರಕ್ಕೆ ಕಾರಣ ಆಯಮ್ಮನದೇಗಾಗುತ್ತದೆ ಎಂದು ಕೆಲವರು ಹೇಳಿದರು. ಅದೇನಲ್ಲ ಆಕೆ ಅರಿಷ್ಟ ಊರಿಗೆ ಶಾಪವಾಗಿದ್ದಾಳೆ ಎನ್ನಲು ಪ್ರಾರಂಭಿಸಿದರು. ಆಕೆಯ ಇಂತಹ ಮುಳ್ಳು ಮೊನೆಯ ಮಾತುಗಳನ್ನು ಭರಿಸದಾದಳು.ತನ್ನೊಳಗೆ ತಾನು ಕುಗ್ಗಿ ಕುಗ್ಗಿ ಅಳತೊಡಗಿದಳು. ತನ್ನ ಅರಿಷ್ಟದ ಕಾರಣದಿಂದಾಗಿಯೇ ಊರು ಬಂಜರು ನೆಲವಾಗುತ್ತಿದೆ ಎಂದು ಅಂದುಕೊಂಡಳು.
ಪರಶಿವನು ಸಮಾಧಾನಿಸಿದರೂ ಕೇಳಲಿಲ್ಲ.
ಗಂಡ ಹೊಲದ ಕಡೆಗೆ ಹೋದಾಗ ಆ ನಡು ಮದ್ಯಾನ್ಹದಲ್ಲಿ ಕಣಗಿಲೆಯ ಹೂಗಳನ್ನು ಬಟ್ಟಲತುಂಬಾ ಬಿಡಿಸಿಕೊಂಡು ಬಂದು ಅರೆದು ಮನಸಿನೊಳಗೆ ಆ ಮಾಯಮ್ಮ ತಾಯಿಗೆ ಅಡ್ಡ ಬಿದ್ದು ಹರಕೆ ಮಾಡಿಕೊಂಡಳು. “ ಊರು ಜನರ ಕಷ್ಟಗಳು ಕೊನಿಯಾಗಲಿ,ಕಣ್ಣೀರು ಬತ್ತಿ ಹೋಗಲಿ, ನೀರು ನೀರ ಸೆಲೆ ಹರಿದುಬರಲಿ…ಮಳೆ ಸುರಿದು ಸುರಿದೂ ನೆಲವೆಲ್ಲಾ ತೊಯ್ದು ಹಸಿರಾಗಲಿ. ಕರೆಗಳೆಲ್ಲಾ ತುಂಬಿಕೊಳ್ಳಲಿ…ಬೆಳೆ ಬೆಳೆದು ಸುಗ್ಗಿಯಾಗಲಿ… ಬರಗಾಲ ಹೋಗಲಿ… ಚಿನ್ನದ ಹಗರಿ ನದಿ ಮತ್ತೆ ಹರಿದಾಡಲಿ…. ತಾಯಿ ನನ್ನ ಆತ್ಮ ಬಲಿದಾನವನ್ನು ತೆಗೆದುಕೋ. ತಗೆದು ಕೋ ತಾಯಿ. ಎಂದು ಬಟ್ಟಲನ್ನು ಎತ್ತಿಕೊಂಡು ಗಟ ಗಟನೆ ಗಂಟಲಿಗೆ ಹಾಕಿಕೊಂಡಳು. ಕುಡಿದ ಕೆಲವೇ ಕ್ಷಣಗಳಲ್ಲಿ ಉಸಿರು ನಿಂತಿತು. ಕಾಲು ಕೈಗಳು ತಣ್ಣಗಾದವು.
ಚೆಂಜೆಗೆ ವೀರಶಿವನು ಬಂದು ನೋಡೋ ವೇಳೆಗೆ ಆಯಮ್ಮನ ಶರೀರವು ಕಪ್ಪಾಗಿ ಹೋಗಿತ್ತು.ಇನ್ನ ಯಾರೇನು ಮಾಡುತ್ತಾರೆ? ಪರಶಿವನ ದುಃಖವನ್ನು ಪದಗಳು ಹಿಡಿಯಲಾಗಲಿಲ್ಲ. ಬಿದ್ದು ಬಿದ್ದು ಅತ್ತನು. ಬಂಗಾರದಂತಹ ಹುಡುಗಿ ಮದುವಿ ಆಗಿ ಆರು ತಿಂಗಳು ಕಳೆಯಲಿಲ್ಲವಲ್ಲೋ…ಊರಿಗಾಗಿ ಪ್ರಾಣವನ್ನೇ ಕಳಕೊಂಡಳು ಎಂದು ಜನರೆಲ್ಲರೂ ಅಂದುಕೊಂಡರು. ಆಕೆಯನ್ನು ಚಿನ್ನದ ಹಗರಿ ನದಿ ದಡದಲ್ಲೇ ಹೂತರು. ಇನ್ನ ಆ ದಿನದಿಂದಲೇ ವೀರ ಶಿವನು ಆ ಮನೆಗೆ ಹೋಗದೆ ತೋಟದ ಬಳಿಯೇ ಇರತೊಡಗಿದನು. ಮನೆ ಬಳಿಗೆ ಹೋದರೆ ತನ್ನ ಪರ‍್ವತಿಯೇ ಗರ‍್ತಿಗೆ ಬರುತ್ತಾಳೆಂದು ಹೋಗುವುದನ್ನು ಬಿಟ್ಟು ಬಿಟ್ಟನು. ಮತ್ತೆ ಮದುವೆ ಮಾಡಿಕೊ ಎಂದು ಯಾರೇಳಿದರೂ ಕೇಳದಾದನು.
ನೀರಿನ ಪರಿಸ್ಥಿತಿ ಇನ್ನಾ ಅದ್ವಾನವಾಯಿತು. ಎಲ್ಲೆಲ್ಲಿಂದಲೋ ಗುಂಡೆಯೊಳಗಿನ ಗಬ್ಬು ನೀರನ್ನು ಕೂಡಾ ದೇವಿಕೊಂಡು ತರುತಿದ್ದಾರೆ.
***
ದಿನಗಳು ಕಳೆದು ಹೋಗುತ್ತಿದ್ದಂತೆ ಊರಿಗೆ ಪರ‍್ಲಬ್ಬವು ಬಂದಿತು.ಊರಿನೊಳಗೆ ಯಾವ ಸಂಭ್ರಮವೂ ಇಲ್ಲ. ಆಗ ಪರಶಿವನೇ ಮುಂದೆ ಬಂದು ಚಾವಡಿಯ ಬಳಿ ಸಮಾವೇಶ ನಡೆಸಿದನು. ನಾವಿರುವ ಊರೊಳಗೆ ಬರಗಾಲ ಹೋಗಬೇಕೆಂದರೆ ಅಲಾಯಿ ಹಬ್ಬವನ್ನು ಮಾಡಬೇಕು. ಬರಗಾಲ ಹೋಗಲು, ಮಳೆಹನಿ ಸುರಿಯಲು,ನಾವು ಊರಲ್ಲಿ ಪೀರ ದೇವರ ಅಲೆಗುಣಿ ತೋಡಬೇಕು.ಪೀರಲು ದೇವರನ್ನು ಕೂಡಿಸಿ, ಕತ್ತಲ ರಾತ್ರಿಯ ಅಲೆ ಕುಣಿಯ ಕೆಂಡದ ಕರ‍್ಯವು ಜರುಗಿಸಬೇಕು ಎಂದನು. ರ‍್ಮಕ್ಕಾಗಿ ಬಲಿದಾನವಾದ ಹಸನ ಹುಸೇನರಂತೆ ನಮ್ಮೂರಿನ ಒಳ್ಳೇದಕ್ಕಾಗಿಯೇ ಬಲಿದಾನವಾದ ಊರ ಪರ‍್ವತವ್ವನನ್ನು ನೆನೆದು ಯಾರಿಂದಲಾದರೂ ಊರಿಗೆ ಒಳ್ಳೆಯದಾದರೆ ಸಾಕು ಎಂದು ಊರಿನ ಹಿರಿಯರು ಹಾಗೇ ಆಗಲಿ ಎಂದು ಒಪ್ಪಿಕೊಂಡರು.

ಅಮಾಸಿ ಆದ ಮರುದಿನ ಅಲೆ ಕುಣಿ ತೋಡಿದರು. ಸುತ್ತಿಟ್ಟ ಪಂಜಾ ದೇವರುಗಳನ್ನು ಪೂಜೆಗಿಟ್ಟರು. ಹುಲಿಗಳು ಊರತುಂಬಾ ಕುಣಿಯತೊಡಗಿದವು. ಅಳ್ಳಳ್ಳಿ ಬುವ್ವಗಳು ಸೊಂಟಕ್ಕೆ ಗಂಟೆಯ ಪಟಗಾಣಿ ಕಟ್ಟಿಕೊಂಡು ಚಡ್ಡು ಹಿಡಿದು ಹೊರಟರು. ಮಸೂತಿಗೆ ಜನ ಬಂದು ಬಂದು ಸಕ್ಕರಿ ಓದಕಿ ಓದಿಸಿ ಸಿಹಿ ಪಡೆದು ಲಾಡಿ ಕಟ್ಟಿಕೊಂಡು ಹೊರಟರು.ಮಸೂತಿ ದೇವರುಗಳು ಊರೊಳಗೆ ಹೊರಟು ಎಲ್ಲಾ ದೇವರುಗಳನ್ನು ಬೇಟಿ ಮಾಡತೊಡಗಿದವು. ತಂಗಿ ಮಯಮ್ಮನ ಗುಡಿ ಹತ್ತಿರ ಬಂದು ಎರಡೂ ದೈವಗಳು ಅಪ್ಪಿಕೊಂಡು ಅತ್ತವು. ಬಿಡಿಸಿಕೊಂಡು ಬಿಡು ಊರಿಗೆ ಒಳಿತಾಗಲಿ ಎಂದು ಬಿಡಿಸಿಕೊಂಡು ಎರಡು ದಿಕ್ಕಿಗೆ ತಿರುಗಿದವು. ಕತ್ತಲ ರಾತ್ರಿಯ ದಿನ ಕಡಿದು ತಂದ ಮರದ ಬಡ್ಡೆಗಳು ಹೊತ್ತಿಕೊಂಡವು. ಕೆಂಪನೆಯ ಕೆಂಡದ ಕೆನ್ನಾಲಿಗೆಗಳು ಎದ್ದವು. ಜನ ಉಪ್ಪು ಹಿಡಿದು ಕಟ್ಟಿಗೆಗಳನ್ನು ಹೊತ್ತು ತಂದು ಕ್ವಾವ್‌ ಸೇನ್‌ ಬಾವ್‌ ಸೇನ್‌ ಎಂದು ಕುಣಿಗೆ ಹಾಕಿ ಉರಿ ಹೆಚ್ಚು ಮಾಡಿ ಸುತ್ತಿ ಸುತ್ತಿ ಹೊರಟರು.ಅಲೆ ಕುಣಿಯ ಕೆಂಡದ ಹಾಸಿಗೆಯೇನೋ ತಯಾರಾಯಿತು ಆದರೆ ಅದರಲ್ಲಿ ನಡೆಯುವವರು ಯಾರು? ಯಾವಾಗಲೂ ನಡೆಯೋ ಪೀರಣ್ಣ ಮಾವ ಮಂಚ ಹಿಡಿದಿದ್ದಾನೆ. ಮಗ ಜಮಾಲ ಕಮ್ಮಾರ ಹುಡುಗಿ ಕಾಂತಮ್ಮನನ್ನು ಎಬಿಸಿಗೊಂಡು ಊರು ಬಿಟ್ಟು ಓಡಿದ್ದಾನೆ.

ಕುಣಿ ಉರಿಯುತ್ತಲೇ ಇದೆ. ಆಗ ಪರಶಿವನೇ ಮುಂದಕ್ಕೆ ಬಂದನು. ಕೈಯೊಳಗೆ ದೊಡ್ಡ ಪೀರದೇವರ ಪಂಜಾವನ್ನು ಹಿಡಿದುಕೊಂಡು ಕುಣಿಯೊಳಗೆ ಹೆಜ್ಜೆ ಇಟ್ಟನು. ಹೆಜ್ಜೆ ಕದಲಲು ಕೆಂಡಗಳು ಹೂತು ಬಿಡುವಂತೆ ಎಗರಿ ಎಗರಿ ಬೀಳುತ್ತಿವೆ.ಅಲೆ ಕುಣಿಯ ತುಂಬಾ ಜನ…ತಾಗಿ ಕೊಳ್ಳುತ್ತಾ…ದಬ್ಬಿಕೊಳ್ಳುತ್ತಾ ನೋಡಲಿಕ್ಕೆ ಮೇಲೆ ಮೇಲೆ ಬೀಳುತಿದ್ದಾರೆ.
ಆ ಕಡೆಯಿಂದ ಈ ಕಡೆಗೆ , ಈ ಕಡೆಯಿಂದ ಆ ಕಡೆಗೆ ಮೂರು ಸಲ ಕೆಂಡದೊಳಗೆ ನಡೆದು ಪೀರದೇವರನ್ನು ಗದ್ದುಗೆ ಮೇಲಿಟ್ಟು ಕಣ್ಣು ತಿರುಗಿ ಕುಸಿದು ಬಿದ್ದನು ಪರಶಿವ.
“ ಅಭ್ಯಾಸವಿಲ್ಲದ ಕೆಲಸವನ್ನು ಯಾಕೆ ಮಾಡಬೇಕಪ್ಪಾ ಸ್ವಾಮಿ” ಎಂದನು ಪಕ್ಕದಲ್ಲಿದ್ದ ಹಿರಿಯ ಕತ್ಲಪ್ಪ.
“ ಈ ಬರಗಾಲ ನೋಡಲಾಗದೇ ಬಂದೆ ಕಣಜ್ಜೋ..” ಎಂದನು ವೀರ ಶಿವ ಬಿಗಿದ ಪಾದಗಳನ್ನು ನೋಡಿಕೊಳ್ಳುತ್ತಾ.
ಆದರೂ ಮಳೆರಾಯ ತಿರುಗಿ ನೋಡುತ್ತಿಲ್ಲ. ಹನಿ ಬೀಳುತ್ತಿಲ್ಲ. ಮಾಡಗಳೆಲ್ಲಾ ಮೊಂಡು ಬಿದ್ದುಬಿಟ್ಟಂಗದೆ.
ಅಲೆ ಕುಣಿಯ ಕೆಂಡ ಚೆಲ್ಲಾಡಿ ದೇವರು ಹೊರಟ ಬಳಿಕ ಆ ಬೂದಿಯನ್ನು ವಿಭೂತಿಯಾಗಿ ಬಳಸಲಿಕ್ಕೆ ,ಆಧಾರವಾಗಿ ಇಟ್ಟುಕೊಳ್ಳಲಿಕ್ಕೆ ಜನರು ಪೈಪೋಟಿಗೆ ಬಿದ್ದಿದ್ದಾರೆ. ಆ ಬೂದಿ ಇದ್ದರೆ ಮನೆಯೊಳಗೆ ದೆವ್ವಗಳ ಕಾಟ ಬರೋದಿಲ್ಲ. ಹತ್ತಿರ ಸುಳಿಯಲಾರವು ಎಂಬುದು ಅವರ ನಂಬಿಕೆ. ಉಳಿದ ಬೂದಿಯನ್ನ ಜನರು ಆಕಾಶಕ್ಕೆ ತೂರಿದರು. ಮಳೆರಾಯನಿಗೆ ಬಾರಪ್ಪೋ ಸ್ವಾಮಿ ಎಂದು ಕೈ ಮುಗಿದರು. ಆದರೂ ಆಕಾಶರಾಯ ಕರಗಲಿಲ್ಲ.
ಜನ ಗುಳೇ ಹೋಗಲು ಶುರು ಮಾಡಿದರು. ನೀರಿಲ್ಲದ ಊರಲ್ಲಿ ಬಿದ್ದು ಸಾಯುವುದಕ್ಕಿಂತಾ ಎಲ್ಯಾನ ಕಾಡಲ್ಲಾದರೂ ಗಡ್ಡೆ ಗೆಣಸು ತಿಂದು ಇರೋದೇ ಪಾಡೆಂದು ಊರ ಜನರು ಮನೆಗಳ ತೊರೆದು ಹೋಗುತಿದ್ದಾರೆ. ಇಷ್ಟು ಕಾಲ ನಂಬಿಕೊಂಡಿದ್ದ ನೆಲವನ್ನು ಬಿಟ್ಟು ಕೊಟ್ಟು ದೇಸಾಂತರ ಹೋಗುತ್ತಿರುವವರ ನೋಡಿದಾಗ ಪರಶಿವನಿಗೆ ನೋವಾಗುತ್ತಿದೆ.
ಆದರೂ ಪಾಪ ಆತನೇನು ಮಾಡುತ್ತಾನೆ. ಕರುಣ ರಸವನ್ನು ಹೊಮ್ಮಿಸುವ ಭಕ್ತ ಕುಮಾರವ್ಯಾಸನ ಕಥೆ ಹೇಳಿಸಿದರೆ ಆ ಮಾಡಗಳು ಕರಗಿ ಕರುಣಿಸುತ್ತವೆಂದು ಯಾರೋ ಹಿರಿಯ ಹೇಳಿದರೆ ಆಗಲಿ ಬಿಡೆಂದು ಶಿವಮೊಗ್ಗದ ಕಡೆಯಿಂದ ಕಲಾ ಕಾರರನ್ನು ಕರೆಕಳಿಸಿದನು. ರಾತ್ರಿಯೆಲ್ಲಾ ಮಾಯವ್ವ ತಾಯಿಗೆ ಕಾವ್ಯದ ರಸವನ್ನು ಉಣಿಸತೊಡಗಿದನು.
ಅಳಿದುಳಿದವರು ಕೂಡಿ ಮಳೆಯ ಹಾಡುಗಳ ಹಾಡುತಿದ್ದಾರೆ.
“ ಯಾತಕ್ಕೆ ಮಳೆ ಹೋದವೋ ಶಿವ ಶಿವಾ
ಲೋಕ ತಲ್ಲಣಿಸುತಾವೋ ಶಿವ ಶಿವಾ…
ಬೇಕಿಲ್ಲಾದಿದ್ದರೆ ಬೆಂಕಿಯ ಮಳೆ ಸುರಿದು
ಉರಿಸಿ ಕೊಲ್ಲಲು ಬಾರದೇ.
ಹೊಟ್ಟೆಗೆ ಅನ್ನ ಇಲ್ಲದಲೆ
ನಡೆದರೆ ಜೋಲಿ ಹೊಡೆಯುತಲೆ
ಪಟ್ಟದಾನೆಯಂತ ಸ್ತ್ರೀಯಾರು ಸೊರಗಿ
ಸೀರೆ ನಿಲ್ಲೋದಿಲ್ಲ ಸೊಂಟಾದ ಮೇಲೆ.
ಹಸುಗೂಸು ಹಸುವಿಗೆ ತಾಲದೆಲೆ
ಅಳುತಾವೆ ರೊಟ್ಟಿ ಕೇಳುತಲೇ
ಹಡೆದ ಬಾಣಂತಿಗೆ ಅನ್ನವು ಇಲ್ಲದಲೆ
ಏರುತಾವೆ ಮೊಳಕೈಗೆ ಬಳೆ.
ಒಕ್ಕಾಲು ಮಕ್ಕಳಂತೆ
ಅವರಿನ್ನು ಮಕ್ಕಳನು ಮಾರುಂಡರು
ಮಕ್ಕಳನು ಮಾರುಂಡು ರೊಕ್ಕವನು ಮಾಡುತಾರೆ
ಮುಕ್ಕಣ್ಣ ಮಳೆ ಕರುಣಿಸೋ..
ಸ್ತ್ರೀಯರು ಅಳುತ್ತಿದ್ದಾರೆ. ಹಳ್ಳಿ ಜನರು ಮುತ್ತಿಕೊಳ್ಳುತಿದ್ದಾರೆ. ಬಂಗಾರದಂತ ಮಕ್ಕಳನ್ನು ಮಾರುವುದೇಗೆ ಎಂದು , ಅಂತ ಘಳಿಗೆ ತಂದ ಮಳೆರಾಯನಿಗೆ ತಾಯಂದಿರು ಬರಕ್ಕೆ ಶಪಿಸುತಿದ್ದಾರೆ. ಇದನ್ನು ಕಂಡ ಪರಶಿವನಿಗೆ ಬಾಯಿ ಕಟ್ಟಿತು. ಕಾಲು, ಕೈಗಳು ಬಿಗಿಯಲಾರಂಭಿಸಿದವು. ನಾಟಿ ವೈದ್ಯರು ಬಂದು ಹಸಿರು ಸೊಪ್ಪಿನ ರಸ ಹಿಂಡಿ ಕೂಡಿಸಿದರು. ಹಾಡು ಕಾವ್ಯಗಳು ಮಧ್ಯದಲ್ಲೇ ನಿಂತು ಹೋದವು.
ಆ ದಿನ ಮೊದ ಮೊದಲು ಪರಶಿವನಿಗೆ ಸ್ವಲ್ಪ ಸ್ವಲ್ಪ ಮತಿ ತಪ್ಪುವುದು ಶುರುವಾಯಿತು. ಹುಚ್ಚು ಹುಚ್ಚಾಗಿ ಮಾತಾಡುವುದು…. ವಿಚಿತ್ರವಾಗಿ ನಗುವುದು..ಅಳುವುದು….ಆಕಾಶಕ್ಕೆ ತಿರುಗಿ ಉಗಿವುದು… ಈ ರ‍್ತನೆಯನ್ನು ನೋಡಿದವರಿಗೆ ಮನವೆಲ್ಲಾ ನೊಂದಿತು.
ಬಂಗಾರದಂತಹ ಮನೆಯ ನಡುಗಂಬ ಕುಸಿದು ಬಿದ್ದಾಗ, ಭೂಮಿಗಳೆಲ್ಲಾ ಪಾಳು ಬಿದ್ದಾಗ ವೀರಶಿವನನ್ನು ನೋಡಿಕೊಳ್ಳರ‍್ಯಾರೂ ಇಲ್ಲದಾದರು. ಕಾಲದೊಂದಿಗೆ ಆತನ ವಯಸ್ಸೂ ಕರಗಿ ಹೋಗುತ್ತಿದೆ. ಪ್ರಾಯ ಹಾರಿ ಹೋಗಿದೆ.
ಮನುಷ್ಯನೇನೂ ಕುಗ್ಗಲಿಲ್ಲ ಆದರೂ ಆಗಾಗ ಬಿದಿರುಕೋಲು ಹಿಡಕೊಂಡು ಊರೊಳಗೆ ಕಾಣಿಸುತಿರುತ್ತಲೇ ಇರುತ್ತಾನೆ. ಆದರೂ ಆ ಮನುಷ್ಯ ಸುಮ್ಮನಿರುತಾನಾ…
***
ಬೆಳಗಾದಗಿಂದಲೂ ಬೆಳ್ಳನೆಯ ಮೋಡಗಳನ್ನು ಬೈಯುತ್ತಲೇ ಇದ್ದವನು ಈಗ ಹೊರಟಿದ್ದಾನೆ.ವೀರಾಪುರದ ಬಳಿಯ ಕಾಕಿ ಚಣ್ಣದ ಎಲ್ಲಜ್ಜನನ್ನು ಕಲೆತು ಅಂಜನ ಹಾಕಿ ನೋಡು ಎಂದನು. ಚಿನ್ನದ ಹಗರಿ ನದಿ ಕತೆಯೇನೋ. ಆತ ನೋಡಿ ಹೇಳಿದನು.” ನೆಲದ ಕೆಳಗಿನಿಂದ ಆಕಾಶದ ಮೋಡದ ತನಕ ಅರಿಷ್ಟವು ಸುತ್ತಿಕೊಂಡಿದೆ. ದೊಡ್ಡ ಬಲಿದಾನ ನಡೆಯದ ಹೊರತು ಇದು ಹೋಗದು. “ ಹೌದೌದು. ಹುಣ್ಣಿಮೆ ದಿನವೂ ಮಾಯವ್ವ ತಾಯಿ ಮೈದುಂಬಿ ಇದೇ ಮಾತೇಳಿದಳು.” ಎನ್ನುತ್ತಾ ಜೋರು ಜೋರಾಗಿ ನಡೆದು ಮಾಯಮ್ಮ ದೇವಿ ಗುಡಿಯ ಬಳಿಗೆ ಬಂದನು. ವಿಗ್ರಹಕ್ಕೆ ಹತ್ತಿದ ಮಸಿಗುಡ್ಡೆಯನ್ನು ತೆಗೆದು ಹಾಕಿದನು. ಹರಿಷಿಣ ಕುಂಕುಮಗಳನ್ನು ಹಚ್ಚಿ ಹೂಗಳನ್ನು ಏರಿಸಿ ಪೂಜೆಗಳನ್ನು ಮಾಡಿದನು. ಗುಡಿಯೊಳಗೆ ಸೇರಿಕೊಂಡ ಬಾವಲಿಗಳನ್ನು ಓಡಿಸಿದನು. ಕಸಕಡ್ಡಿ ,ಮಲಿನಗಳನ್ನೆಲ್ಲಾ ತೆಗೆದು ದಿಬ್ಬದ ಮೇಲೆ ಒಗೆದನು. ಬಾಯಿಗೆ ಬಂದ ಮಂತ್ರಗಳೇನೋ ಆ ತಾಯಿಯ ಮುಂದೆ ಕೂತು ಹೇಳಿದನು. ಹಾಡಿದನು. ಸಾಷ್ಟಾಂಗ ನಮಸ್ಕಾರಗಳನ್ನು ಮಾಡಿದನು. ಅತ್ತನು. ರಾತ್ರಿಯೆಲ್ಲಾ ಆ ತಾಯಿಯ ವಿಗ್ರಹದ ಬಳಿಯೇ ಕೂತು ಪ್ರರ‍್ಥಿಸಿದನು. ಬೆಳ್ಳಿ ಮೂಡುವ ವೇಳೆಗೆ ಯಾವುದೋ ರಹಸ್ಯವನ್ನು ಕಂಡು ಹಿಡಿದವನಂತೆ ಪರಶಿವನ ಸಂಭ್ರಮದಿಂದ ಊರಿನೊಳಗೆ ಬಂದನು.
“ ಇನ್ನ ಇರಲ್ಲ ಬಿಡು… ಈ ಬರಗಾಲವನ್ನ ಅವ್ನವೌನ್‌ ಅದರ ಹೆಣ ನೋಡ್ತಾನಿ” ಎಂದು ಊರೆಲ್ಲಾ ತಿರುಗುತ್ತಾ ಹೇಳಿದನು. ಜನರೆಲ್ಲಾ ಈ ಹುಚ್ಚು ಮಾತುಗಳನ್ನ ಆಶ್ರ‍್ಯದಿಂದ ಕೇಳಿದರು.
ಬಿದಿರು ಕೋಲನ್ನು ಪಕ್ಕಕ್ಕೆ ಬಿಸಾಕಿ ಮಾಯಮ್ಮ ತಾಯಿ ದೇವರ ಗುಡಿ ಮುಂದೆ ಆ ದೇವಿಗೆ ಧಿಡನಮಸ್ಕಾರ ಮಾಡಿದನು. ಅಂಗೇ ಹೊರ ಹೊಂಟನು… ಎಲ್ಲಿಗೆ ಸಿದ್ದಯ್ಯನ ಗುಡ್ಡದ ಮೇಲಕ್ಕೆ. ರ‍್ಮಾನುಷವಾಗಿ ಒಣಗಿ ಬೀಳು ಬಿದ್ದಿರುವ ಭೂಮಿಗಳು. ಕೆಂಪು ಧೂಳಿನಿಂದ ಸುತ್ತೂ ತಿರುಗಿ ಬರುತ್ತಲಿದೆ. ಏನು ಧೂಳಿನ ದೆವ್ವ ಗಾಳಿ. ಹಾಗೇ ಮುಂದಕ್ಕೆ ಸಾಗಿದನು. ಒಣಗಿದ ಕೆರೆಯ ಬಳಿ ನಿಂತು ಸುತ್ತೂ ಮಾಯಮ್ಮ ತಾಯಿಯನ್ನ ಬಿಡದಂತೆ ಕಂಡನು. ದುಃಖಿಸಿದನು. ದೂರದಲ್ಲಿ ಊರ ಜನರು ಓಡುತ್ತಾ ಇತ್ತ ಕಡೆಗೇ ಬರುತಿದ್ದಾರೆ.
ರಾತ್ರಿಯೆಲ್ಲಾ ಕುಳಿತು ಮಸೆದು ಇಟ್ಟ ರ‍್ಧಚಂದ್ರಾಕಾರದ ಗಂಡು ಗೊಡಲಿಗೆ ಮುತ್ತಿಟ್ಟನು. ನೆಲದ ಮಣ್ಣನ್ನು ತೆಗೆದುಕೊಂಡು ಕಣ್ಣಿಗೆ ತೀಡಿಕೊಂಡನು. “ ನಮಗೇಕೆ ತಾಯಿ ಈ ನರಕ. ಆ ಕಡಿಗೆ ಎಲ್ಲರನ್ನ ಸಾಯಿಸಾದರೂ ಸಾಯಿಸು. ಇಲ್ಲದಿದ್ದರೆ ಎಲ್ಲರಿಗನ್ನಾ ಹೊಟ್ಟೆತುಂಬಿಸು. ನಡುವಿನ ಈ ಬರಗಾಲವೇಕೆ” ಕೈಯೊಳಗೆ ಉಳಿದ ಮಣ್ಣನ್ನು ನೆಲಕ್ಕೆ ಹಾಕಿದನು.
“ ನನ್ನ ಪ್ರಾಣ ತಗಂಡನ್ನಾ ಶಾಂತವಾಗಿ ನಾಲ್ಕು ಚುಕ್ಕೆಗಳ ಕಣ್ಣೀರ ಹನಿಸು… ಎನ್ನುತ್ತಾ ಕೈಯೊಳಗಿನ ಗಂಡಗೊಡಲಿಯನ್ನ ಬಲವಾಗಿ ಗಿರ ಗಿರನೇ ತಿರುಗಿಸಿ ಮುಗಿಲ ಕಡೆಗೆ ಎಸೆದನು ಅದು ತಿರುಗುತ್ತಾ ತಿರುಗುತ್ತಾ ಕೆಳಕ್ಕೆ ಬರುತ್ತಿದೆ…ಬರುತ್ತಿದೆ..ಬರೋ ಕಡೆಗೇ ಶಿರ ಬಾಗಿಸಿದನು ವೀರ ಶಿವ. ತಲೆ ಬಾಗಿಸಿದವನನ್ನ ಪಕ್ಕಕ್ಕೆ ಎಳೆದುಕೊಂಡರು ಊರ ಜನರು.
“ ಬಿಡ್ರೋ… ಬಿಡ್ರೋ…” ಅಂತ ಬಿಡಿಸಿಕೊಂಡನು ವೀರಶಿವ.
ಮೇಲಿಂದ ಬೀಳುತಿದ್ದ ಗಂಡು ಗೊಡಲಿ ನೆಲದ ಮಣ್ಣಲ್ಲಿ ನಾಟಿಕೊಂಡಿತು.
“ ಏನು ಸ್ವಾಮಿ ಹಿಂಗ ಮಾಡಿದಿರಿ” ಜನರೊಳಗಿನ ಯಾರೋ ಕೇಳಿದರು.
“ ಸಾಯಲು ಬಿಡ್ರಿ ನನ್ನನ್ನು ಸಾಯಲು ಬಿಡ್ರಿ” ನಿಮಗೆ ಮಳೆ ರ‍್ತಾವು. ನೀವು ಸುಖವಾಗಿರುತ್ತೀರಿ..” ದುಃಖದಿಂದಲೇ ಹೇಳುತಿದ್ದಾನೆ.
“ ಸತ್ತರೇ ಮಳೆ ಬರುತಾದ ಅಂದ್ರ ದಿನಕ್ಕೊಬ್ಬರು ಸಾಯುತಿಲ್ಲವೇ ಸ್ವಾಮಿ. ಸಾವೇ ಸಮಾಧಾನವಾ…” ಎಂದು ಹೇಳಿದ ಜನರೊಳಗಿನ ಹಿರೀಕ.
“ ಮಾಯಮ್ಮ ತಾಯಿಗೆ ಕರುಣೆ ಹುಟ್ಟಿದರೆ ಈಗಲೇ ಮಳೆ ಬರುತ್ತದೆ. ನಾವ್ಯಾಕೆ ಪ್ರಾಣ ಕಳಕೋ ಬೇಕು. ಯಾರದೋ ಹೆಣ್ಣು ಧ್ವನಿ ಕೇಳುತ್ತಿದೆ.
ಓ… ತನೇನು ಮಾಡುತಿದ್ದೇನೆ. ಯಾಕೆ ಹೀಗೆ ರ‍್ತಿಸುತಿದ್ದೇನೆ. ಇಲ್ಲ. ನಾನು ಜನರಿಗಾಗಿ ವೀರಶಿವನಾಗಿಯೇ ಬದುಕಬೇಕು. ಜನರಿಗಾಗಿ ಬದುಕಬೇಕು. ಊರಿಗಾಗಿ ಬದುಕಬೇಕು. ಕಾಲ ಕೆಳಗೆ ತಣ್ಣನೆಯ ತಂಪು…ತಣ್ಣಗೆ ತಂಪಾದ ಸಣ್ಣನೆಯ ಅನುಭವ… ನೀರ ತೇವ…ಭೂಮಿ ಬಿರಿಯಿತು. ಭೂಮಿ ಉರಿಯಿತು. ಮುಗಿಲು ಬೆದರಿತು.
ಕವಿದುಕೊಂಡ ಕಪ್ಪು ಮೋಡಗಳು ಒಂದಕ್ಕೊಂದು ತಿವಿದುಕೊಂಡು ಅಪ್ಪಳಿಸಿದವು. ಮಿಂಚು ಮಿಂಚು ಹೆಣೆದುಕೊಂಡು ಬೆಂಕಿ ಬೆಳಗಿದವು. ಗುಡುಗು ಸಿಡಿಲು ಸಿಡಿದುಕೊಂಡು ಬೆಂಕಿ ಉಗಿದವು. ಆ ಬಿಸಿಗೆ ಕಪ್ಪು ಮೋಡಗಳು ಕದಲಿ ಕೆಳಗಿಳಿದವು. ಎಲ್ಲಿದ್ದವೋ ಅಲ್ಲೇ. ಎಲ್ಲಿ ನಿಂತ ಮೋಡ ಅಲ್ಲೇ ಹೃದಯವನ್ನು ತೆರೆದು ಕಣ್ಣೀರು ಸುರಿಸಿದಂತಹ ಹನಿಗಳು.
ಒಂದರ ನಂತರ ಒಂದು ನೆಲಕ್ಕೆ ಹಾರಿ ಹಾರಿ ಬರುತ್ತಲಿವೆ ಮಳೆ…ಮಳೆ..ಸುರಿಯುತ್ತಲೇ ಹೋಯಿತು. ಹಗಲೂ ಇರುಳು. ಹೊಳೆಗಳು ತುಂಬಿ ಹೊರಳತೊಡಗಿದವು.
ತಗ್ಗು ಹಳ್ಳ ದಿನ್ನೆಗಳೆಲ್ಲಾ ನೀರು…ನೀರು …ನೀರು.
ಎತ್ತ ನೋಡಿದರೂ ನೀರು… ಕರೆ ಕೋಡಿ ಬೀಳುತ್ತಿದೆ.
ತಾಯಿ ಮಹಾತಾಯಿ.ಮಾಯಮ್ಮ ತಾಯಿ ಹರಿಯುತ್ತಿದ್ದಾಳೆ.
ಚಿನ್ನದ ಹಗರಿಯಾಗಿ ಹರಿಯುತಿದ್ದಾಳೆ. ಪ್ರವಾಹವಾಗಿ ಉಕ್ಕುತಿದ್ದಾಳೆ.
ಹಸಿರಾಗಿ ನಗುತ್ತಾ ಹಾಡುತಿದ್ದಾಳೆ.
ಒಣಗಿದ ಬೇರುಗಳಿಗೆ ಉಸಿರು ಬಂದಿತು.
ಬಾಡಿದ ಎಲೆಗಳಿಗೆ ಪ್ರಾಣ ಬಂದಿದೆ… ಬಂದಿದೆ …ಬಂದಿದೆ.
ಊರಿಗೆ ಉಸಿರು ಬಂದಿದೆ. ಊರು ಹಸಿರ ಮರವಾಗಿದೆ.
ಪಕ್ಷಿಗಳ ಗೂಡಾಗಿದೆ…ಸುಗ್ಗಿಯ ನೆಲವಾಗಿದೆ… ಹಾಡುಗಳ ಕಣವಾಗಿದೆ…ಜಾತ್ರೆಯ ನದಿಯಾಗಿದೆ….ಮಾಯಮ್ಮ ತಾಯಿಯ ಬೆಳ್ಳಿ ಮುಖವಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಆತ್ಮಕತೆ | ಕೃಷ್ಣಪ್ಪನವರ ನಿಧನ : (09.06.1938 – 30.04.1997)

Published

on

~ ರುದ್ರಪ್ಪ ಹನಗವಾಡಿ

ದ್ರಾವತಿಯಿಂದ ಬೆಂಗಳೂರಿಗೆ ಬಂದ ಕೃಷ್ಣಪ್ಪನವರು ಬಹುಜನ ಸಮಾಜ ಪಕ್ಷದ ಕೆಲಸ ನಿರ್ವಹಿಸುತ್ತಿದ್ದರೂ ಅವರ ರಕ್ತಮಾಂಸ ಬಸಿದು ಕಟ್ಟಿದ ಮೂಲಸಂಘಟನೆ ಡಿಎಸ್‌ಎಸ್ ಹಲವು ಗುಂಪುಗಳಾಗಿ ಒಬ್ಬರಿಗೊಬ್ಬರು ಅನುಮಾನಗಳಿಂದ ದೂರದೂರವಾಗಿದ್ದರು. ಇವರ ಜೊತೆ ಆತ್ಮೀಯ ಹೋರಾಟಗಾರರಾಗಿದ್ದ ಅನೇಕರು ಮಾತಿಲ್ಲದೆ ಅವರವರೇ ಕೊರಗುತ್ತಿದ್ದರು.

ಶಿವಮೊಗ್ಗ ಭದ್ರಾವತಿಯಲ್ಲಿ ಕೃಷ್ಣಪ್ಪನವರಿಗೆ ಎಲ್ಲಾ ಜಾತಿಯ, ಸಾಹಿತ್ಯ ಮತ್ತು ಸಾಂಸ್ಕೃತಿಕ ನಾಯಕರ ಬೆಂಬಲ, ಡಿಎಸ್‌ಎಸ್ ನ ಎಲ್ಲ ಹೋರಾಟಗಾರರಿಗೂ ಸಿಗುತ್ತಿತ್ತು. ಬೆಂಗಳೂರಿಗೆ ಬಂದ ನಂತರ ಆದ ಬೆಳವಣಿಗೆಗಳ ಬಗ್ಗೆ ಒಂದು ರೀತಿಯ ವಿಷಾದ ತುಂಬಿದ ಭಾವ ಕೃಷ್ಣಪ್ಪನವರಲ್ಲಿ ತುಂಬಿತ್ತು. ಆದರೂ ಅವರು ಮತ್ತೆ ಇದನ್ನು ಪುನಶ್ಚೇತನಗೊಳಿಸುವ ಕರ‍್ಯದಲ್ಲಿ ಹಗಲು ರಾತ್ರಿ ರಾಜ್ಯದ ವಿವಿಧೆಡೆಗೆ ಪ್ರಯಾಣ ಮಾಡುತ್ತ ವಿವಿಧ ಜಿಲ್ಲೆಗಳಿಗೆ ಹೋಗಿ ಡಿಎಸ್ ಎಸ್ ಸಂಘಟನೆಯ ಕರ‍್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದರು. ಅವರು ಡಿಎಸ್‌ಎಸ್ ಸಂಘಟನೆಯಲ್ಲಿನ ಬೆಳವಣಿಗೆಗಳ ಬಗ್ಗೆ ಮಾಡಿದ ನಿರಾಶಾ ಕಾಲದಲ್ಲಿಯೇ ಛಲಬಿಡದ ವಿಕ್ರಮನಂತೆ ದಲಿತರನ್ನೆಲ್ಲ ಪುನಃ ಸಂಘಟಿಸಿ ಪುನಶ್ಚೇತನ ಗೊಳಿಸುವ ಬಗ್ಗೆ ಅವರ ಸಹಪಾಠಿ ಆರ್. ನಾಗರಾಜ್, ಅರ್ಕೇಶ್ ಮತ್ತು ನಾನು ಅವರ ಮನೆಯಲ್ಲಿ ಸೇರಿದಾಗ ಚರ್ಚಿಸುತ್ತಿದ್ದರು. ಮೈಸೂರಿನ ಮಹಾದೇವ ಬೆಂಗಳೂರಿನ ಸಿದ್ಧಲಿಂಗಯ್ಯ ಇವರುಗಳ ಸಂಬಂಧ ಬಹಳ ದೂರ ಸರಿದಿತ್ತು. ಅದನ್ನು ಪುನಃ ಪುನಶ್ಚೇತನಗೊಳಿಸುವುದಕ್ಕೆ ಬೇಕಾದ ಶ್ರಮ ಹಾಕಲು ಮಹಾದೇವನಿಗಾಗಲೀ, ಸಿದ್ಧಲಿಂಗಯ್ಯನಿಗಾಗಲೀ ಇರಲಿಲ್ಲ. ಹಾಗಾಗಿ ಮತ್ತೆ ಏಕಾಂಗಿಯಾಗಿಯೇ ಎಲ್ಲಾಕಡೆ ಇವರೊಬ್ಬರೇ ತಿರುಗಾಡಿ ಸಂಘಟಿಸಲು ಶ್ರಮಿಸುತ್ತಿದ್ದರು.

ಈ ಯೋಜನೆಯ ಭಾಗವಾಗಿ ಆಯೋಜಿಸಿದ್ದ ಅಂಬೇಡ್ಕರ್ ರ‍್ಯಾಲಿಯಲ್ಲಿ ಭಾಗವಹಿಸಲು, ಗದಗ ಜಿಲ್ಲಾ ಕೇಂದ್ರದಲ್ಲಿ ವ್ಯವಸ್ಥೆಗೊಳಿಸಿದ ಸಭೆಗೆ ಹೋಗಿದ್ದರು. ನಾನು ಯಲಹಂಕ ಆಫೀಸಿನ ಕೆಲಸ ಮುಗಿಸಿ ಮಧ್ಯಾಹ್ನ ಊಟಕ್ಕೆ ಅವರ ಮನೆಗೆ ಹೋದಾಗ ಮೇಷ್ಟರು ಗದಗ್‌ಗೆ ಹೋದ ಸುದ್ದಿ ತಿಳಿದಿತ್ತು. ಗದಗ್‌ನಲ್ಲಿ ಕೃಷ್ಣಪ್ಪನವರ ತಂಗಿಯ ಮಗಳು ಮೈತ್ರ‍್ರಾ ಕೂಡಾ ಇದ್ದುದು, ಮೈತ್ರಾಳ ಗಂಡ ಬ್ಯಾಂಕ್‌ವೊಂದರಲ್ಲಿ ಉದ್ಯೋಗಿಯಾಗಿದ್ದು, ಸಂಘಟನೆಯ ಜೊತೆ ಅವರನ್ನೆಲ್ಲಾ ನೋಡಿಕೊಂಡು ಬರುವರೆಂದು ಮಾತಾಡಿಕೊಂಡು ನಾನು ಮಧ್ಯಾಹ್ನ ಊಟ ಮುಗಿಸಿಕೊಂಡು ಮತ್ತೆ ಆಫೀಸಿಗೆ ಹೋಗಿದ್ದೆ. ಆದರೆ ಸಂಜೆ 5ರ ವೇಳೆಗೆ ಕೃಷ್ಣಪ್ಪನವರು ಗದಗ್‌ನಲ್ಲಿ ಹುಷಾರಿಲ್ಲದೆ ಆಸ್ಪತ್ರೆಯಲ್ಲಿರುವುದಾಗಿಯೂ ಗದಗ್‌ನಿಂದ ಫೋನ್ ಬಂದಿರುವುದಾಗಿಯೂ ನನ್ನ ಆಫೀಸಿಗೆ ಮಗಳು ಶಾಲಿನಿ ಫೋನ್ ಮಾಡಿದ್ದಳು. ಇಂದಿರಾ ಆಫೀಸ್ ಮುಗಿಸಿ ಮನೆಗೆ ಬರುವ ವೇಳೆಗೆ ನನ್ನ ಹೆಂಡತಿ ಗಾಯತ್ರಿಗೂ ಫೋನ್ ಮಾಡಿ ತಿಳಿಸಿದೆ. ಅರ್ಜೆಂಟಾಗಿ ನಾವು ಎಲ್ಲರೂ ಗದಗ್‌ಗೆ ಹೋಗಿ ಮೇಷ್ಟçರನ್ನ ಕರೆದುಕೊಂಡು ಬಂದು ಇಲ್ಲಿಯೇ ಶುಶ್ರೂಷೆ ಕೊಡಿಸುವ ಎಂದು ಮಾತಾಡಿಕೊಂಡು ರಾತ್ರಿಯೇ ಬೆಂಗಳೂರಿನಿಂದ ಹೊರಟು ಮಧ್ಯೆ ರಾತ್ರಿ ನಮ್ಮೂರ ಬಳಿ ನಿಂತು ನಮ್ಮ ಊರಿನವರಿಗೂ ವಿಷಯ ತಿಳಿಸಿ ಬೆಳಿಗ್ಗೆ 7 ಘಂಟೆಗೆ ಗದಗ ತಲುಪಿದೆವು.

ಬೆಂಗಳೂರು ಬಿಟ್ಟು ಹೊರಟಾಗ ಅವರ ಆರೋಗ್ಯದಲ್ಲಿನ ಸಮಸ್ಯೆ ಸ್ಪಷ್ಟವಾಗಿ ಏನೆಂದು ತಿಳಿಯದಿದ್ದರೂ-ಅವರ ಬಿಡುವಿಲ್ಲದ ತಿರುಗಾಟಕ್ಕೆ ತಡೆಹಾಕಿ ಆರೋಗ್ಯದ ಕಡೆ ಗಮನ ನೀಡಲು ಏನೆಲ್ಲ ಕ್ರಮ ಜರುಗಿಸಬೇಕೆಂದು ನನ್ನ ಹೆಂಡತಿ ಗಾಯತ್ರಿ ಇಂದಿರಾಗೆ ಸಲಹೆ ನೀಡುತ್ತಿದ್ದಳು. ಕೃಷ್ಣಪ್ಪನವರ ಆರೋಗ್ಯ ಕೆಡಿಸುವಂತಹ ಅಭ್ಯಾಸಗಳು ಅವರಿಗೆ ಮೊದಲಿನಿಂದಲೂ ಇರಲಿಲ್ಲ. ಡಿಎಸ್‌ಎಸ್‌ನ ಸಮಾವೇಶಗಳಲ್ಲೂ ಕೂಡ ಎಲ್ಲರಿಗೂ ಸ್ವಚ್ಛತೆ, ವ್ಯಾಯಾಮ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಲು ಪ್ರಭಾವಿಸುತ್ತಿದ್ದರು. ಕೊಳಕುತನ, ಸೋಮಾರಿತನ ಬಾಲ್ಯದಿಂದಲೂ ಕೃಷ್ಣಪ್ಪನವರ ಬಳಿ ಸುಳಿದಿರಲಿಲ್ಲ. ಊಟ ಉಪಚಾರಗಳಲ್ಲೂ ಶಿಸ್ತುಬದ್ದರಾಗಿದ್ದು ಅವರಿಗೆ ಅನಾರೋಗ್ಯ ಎಂಬ ಮಾತು ಕೇಳಿರಲಿಲ್ಲ. ಈ ಕಾರಣದಿಂದ ಏನಾದರೂ ಆಗಿರಲಿ ಬಂದ ನಂತರ ಅವರನ್ನು ಹೆಚ್ಚು ತಿರುಗಾಡಲು ಬಿಡಬಾರದೆಂಬ ತೀರ್ಮಾನ ಮಾಡಿಕೊಂಡು ನಾವೆಲ್ಲ ಗದಗ್ ಕಡೆ ಹೊರಟಿದ್ದೆವು.

ಹೋದಾಕ್ಷಣ ಅವರನ್ನು ಐಸಿಯುನಲ್ಲಿ ನಾವು ಮೂವರೂ ಹೋಗಿ ನೋಡಿದೆವು. ಕಣ್ಣು ಬಿಟ್ಟು ನೋಡಿದ್ದನ್ನು ಬಿಟ್ಟರೆ ಬೇರೇನೂ ಮಾತಾಡಲಿಲ್ಲ. ಇಂತಹ ಪರಿಸ್ಥಿತಿಯನ್ನು ನಾವ್ಯಾರು ನಿರೀಕ್ಷಿಸಿರಲಿಲ್ಲ. ದಾರಿಯುದ್ದಕ್ಕೂ ಯೋಚಿಸಿಕೊಂಡು ಬಂದದ್ದಕ್ಕೂ ಇಲ್ಲಿನ ಪರಿಸ್ಥಿತಿ ನೋಡಿ ನಾವೆಲ್ಲಾ ಗರಬಡಿದಂತಾಗಿ ಕೂತಿದ್ದೆವು. ಗಾಯತ್ರಿ, ಇಂದಿರಾ ಮಾತಾಡದೆ ಉಸಿರಾಡುತ್ತಿದ್ದರು. ಮತ್ತೆ 10-15 ನಿಮಿಷಗಳಲ್ಲಿ ಪರಿಸ್ಥಿತಿ ಹದಗೆಡುತ್ತಿದೆ ಎಂದು ವಾರ್ಡ್ ಬಾಯ್ ಹೇಳಿದಾಗ ನಾವೆಲ್ಲ ಒಳಗೆ ಹೋದೆವು. ಬಂದ ಡಾಕ್ಟರ್ ನಮ್ಮನ್ನೆಲ್ಲ ಮತ್ತೆ ಹೊರಹೋಗಲು ಹೇಳಿ ಶುಶ್ರೂಷೆ ಮಾಡುತ್ತಿದ್ದರು. ಏನಾಯಿತು, ಹೇಗಾಯಿತು ಎಂದು ನಾವುಗಳೆಲ್ಲ ಸಾವರಿಸಿಕೊಳ್ಳುತ್ತಿರುವಾಗಲೇ ಮೇಷ್ಟರು ಕೊನೆಯುಸಿರೆಳೆದಿದ್ದರು. ಅಂದು ದಿನಾಂಕ 30-4-1997 ಬೆಳಗಿನ 8.30 ಇರಬಹುದು. ನಾವು ಬಂದು ನೋಡಿ ನಂತರ ಫ್ರೆಶ್ ಆಗಿ ನಂತರ ಏನು ಮಾಡುವುದು ಎಂದು ಯೋಚಿಸುವ ಮುನ್ನ ಇದೆಲ್ಲ ಆಗಿ ಹೋಗಿತ್ತು.

ಈಚೆ ಬಂದ ನನಗೆ ಸಾವನ್ನ ಹೀಗೆ ನೇರವಾಗಿ ಎದುರಿಸಿದ ಸಂದರ್ಭಗಳು ಇರಲಿಲ್ಲ. ಮುಂದಿನ ವಿಚಾರವನ್ನು ಯೋಚನೆ ಮಾಡುತ್ತಲೇ ಹತ್ತಿರದಲ್ಲಿದ್ದ ಟೆಲಿಫೋನ್ ಬೂತ್‌ನಿಂದ ಮೈಸೂರಿನಲ್ಲಿದ್ದ ಮಗಳು ಸೀಮಾ ಮತ್ತು ಬೆಂಗಳೂರಿನಲ್ಲಿದ್ದ ಶಾಲುಗೆ ಹಾಗೂ ಬೆಂಗಳೂರಿನ ವಿಧಾನಸೌಧದಲ್ಲಿ ಪಿಎಸ್ ಆಗಿದ್ದ ಬಸವಣ್ಯಪ್ಪನಿಗೆ ತಿಳಿಸಿ ಎಲ್ಲಾ ಡಿಎಸ್‌ಎಸ್ ಸ್ನೇಹಿತರಿಗೆ ತಿಳಿಸಲು ಹೇಳಿದೆ. ಹರಿಹರದಲ್ಲಿನ ಮೇಷ್ಟರ ತಮ್ಮಂದಿರಿಗೆ ಸುದ್ದಿ ತಿಳಿಸಿ ಬಂದೆ. ಸಿರಸಿಯಲ್ಲಿದ್ದ ಮೇಷ್ಟರ ಇನ್ನೊಬ್ಬ ತಮ್ಮ ಮಾರುತಿಗೆ ತಿಳಿಸಿ ಮೇಷ್ಟರ ಪಾರ್ಥಿವ ಶರೀರವನ್ನು ಹರಿಹರಕ್ಕೆ ತೆಗೆದುಕೊಂಡು ಹೋಗುವ ಬಗ್ಗೆ ವ್ಯವಸ್ಥೆ ಮಾಡಿದೆ. ಆಸ್ಪತ್ರೆಯ ರೀತಿನೀತಿಗಳನ್ನು ಮುಗಿಸಿ-ಸಮಾಧಿಯಾಗುವುದು ಇನ್ನೂ ಒಂದು ದಿನ ತಡವಾಗುವುದರಿಂದ ದೇಹಕ್ಕೆ ಬೇಕಾದ ರೀತಿಯಲ್ಲಿ ಇಂಜೆಕ್ಷನ್ ಕೊಡಿಸಿ ಸುಮಾರು 3-4 ಗಂಟೆಗೆ ಗದಗ ಬಿಟ್ಟು ಹರಿಹರ ಟೌನ್‌ನಲ್ಲಿದ್ದ ಮೇಷ್ಟರ ಮನೆಗೆ ಸಂಜೆ 7 ಗಂಟೆಯ ಸಮಯಕ್ಕೆ ತಲುಪಿದ್ದೆವು.

ರಾತ್ರಿ ಭಜನೆ ಮಾಡಲು ವ್ಯವಸ್ಥೆ ಮಾಡಿ ನಂತರ ಮೇಷ್ಟರ ಸಂಸ್ಕಾರ ಎಲ್ಲಿ ಏನು ಎಂದು ಅವರ ತಮ್ಮಂದಿರು ತಂಗಿಯರ ಜೊತೆ ಮಾತಾಡಿದಾಗ ಅದೆಲ್ಲ ತುಂಗಭದ್ರಾ ನದಿಯ ದಡದಲ್ಲಿ ಮಾಡುವುದು ಎಂದು ತಿಳಿಸಿದರು. ಈ ಬಗ್ಗೆ ದುಃಖದಲ್ಲಿ ಮುಳುಗಿದ್ದ ಇಂದಿರಾ ಜೊತೆ ಏನೂ ಮಾತಾಡುವ ಸ್ಥಿತಿಯಲ್ಲಿರಲಿಲ್ಲ. ಇದೇ ಚಿಂತೆಯಲ್ಲಿ ನಾನು ಮೂರು ಕಿ.ಮೀ. ದೂರದ ನಮ್ಮ ಊರಿಗೆ ಬಂದಿಳಿದೆ. ರಾತ್ರಿಯಲ್ಲಿ ನಿದ್ದೆ ಬಾರದೆ ಒದ್ದಾಡಿದೆ. ಹರಿಹರ ತುಂಗಾ ನದಿ ದಡದಲ್ಲಿ ಸಂಸ್ಕಾರ ಮಾಡುವ ಅವರ ನಿರ್ಧಾರವನ್ನು ತಿಳಿದು ಮನಸ್ಸಿಗೆ ಒಂದು ಚಿಂತೆಯಾಯಿತು. ಇಷ್ಟೊಂದು ಹೋರಾಟದ ಜೀವನ ನಡೆಸಿದ ಮನುಷ್ಯನ ನೆನಪು ನಾಳೆಗೆ ಭೌತಿಕವಾಗಿ ಕೊನೆಯಾಗುವ ಬಗ್ಗೆ ಚಿಂತೆಯಾಯಿತು. ನಾನು ನಮ್ಮ ಅಣ್ಣ ಅವ್ವ ಇವರ ಜೊತೆ ಚರ್ಚಿಸಿ-ನಮ್ಮ ತೋಟದ ಜಮೀನಿನಲ್ಲಿ ಸಮಾಧಿ ಮಾಡಿದರೆ ಹೇಗೆ ಎಂದು ಯೋಚಿಸಿ, ಬೆಳಿಗ್ಗೆ ಈ ನನ್ನ ಯೋಚನೆಯನ್ನು ಮೇಷ್ಟರ ತಮ್ಮ ಮಾರುತಿ ಬಳಿ ಚರ್ಚಿಸಿ ನಂತರ ಎಲ್ಲ ಅವರ ಸಂಬಂಧಿಗಳಿಗೂ ವಿಚಾರಿಸಿದೆ. ಅವರೆಲ್ಲರೂ ನನ್ನ ಸಲಹೆಗೆ ಒಪ್ಪಿದರು. ಅದರಂತೆ ಎಲ್ಲಾ ಡಿಎಸ್‌ಎಸ್‌ನ ಕರ‍್ಯಕರ್ತರಿಗೆ, ಅಧ್ಯಾಪಕರಿಗೆ, ರಾಜಕಾರಣಿಗಳಿಗೆ ತಿಳಿಸಿದೆವು. ಹರಿಹರದಿಂದ ನಮ್ಮೂರಿನಿಂದಲೇ ತರಿಸಿದ್ದ ಟ್ರಾಕ್ಟರ್‌ನಲ್ಲಿ ನಮ್ಮ ತೋಟದಲ್ಲಿ ಸುಮಾರು 4 ಗಂಟೆಯ ಸಮಯಕ್ಕೆ 1-5-1997ರಂದು ಕೃಷ್ಣಪ್ಪನವರ ಅಂತಿಮ ಕಾರ್ಯವನ್ನು ಮಾಡಿದೆವು. ಅಂತಿಮ ದರ್ಶನ ಪಡೆಯಲು ರಾಜ್ಯದಾದ್ಯಂತ ಪ್ರಗತಿಪರರು, ಡಿಎಸ್‌ಎಸ್ ಕರ‍್ಯಕರ್ತರು, ರಾಜಕಾರಣಿಗಳ ದಂಡೇ ಆಗಮಿಸಿತ್ತು. ಸಮಾಧಿಯಾದ ನಂತರ ಡಿಎಸ್‌ಎಸ್‌ನ ಎಲ್ಲಾ ಬಣಗಳ ಕರ‍್ಯಕರ್ತರೂ ಕೃಷ್ಣಪ್ಪನವರ ಹೋರಾಟದ ಆಶಯಗಳನ್ನು ಈಡೇರಿಸಲು ಅಂದು ಪ್ರಮಾಣ ಮಾಡುವ ಪ್ರತಿಜ್ಞೆ ಮಾಡಿ ನಿರ್ಗಮಿಸಿದ್ದರು.

1997ರಲ್ಲಿ ಕೃಷ್ಣಪ್ಪನವರ ನಿರ್ಗಮನದ ನಂತರ ಕರ್ನಾಟಕದ ದಲಿತ ಹೋರಾಟದ ಸಮಗ್ರ ಚಿತ್ರಣ ಹಲವು ಟಿಸಿಲುಗಳಾಗಿ ಹೊರಹೊಮ್ಮಿದ್ದವು. ನನ್ನ ಸರ್ಕಾರಿ ನೌಕರಿಯ ಜೊತೆ ಎಲ್ಲ ಬಣಗಳಲ್ಲಿ ನನಗೆ ಬಲ್ಲವರಿದ್ದರೂ ಯಾರೊಡನೆ ಒಡನಾಡುವುದು ಎಂಬ ಪ್ರಶ್ನೆ ಮೂಡುತ್ತಿತ್ತು. ಆದರೂ ಯಾರು ಏನೇ ಕರ‍್ಯಕ್ರಮ ಮಾಡುವಾಗ ಸಹಕಾರ ನೀಡಲು ಕೋರಿದರೆ ಮುಕ್ತ ಮನಸ್ಸಿನಿಂದ ಸಹಾಯ ಮಾಡುತ್ತಿದ್ದೆ.

ಕೃಷ್ಣಪ್ಪನವರ ನಿಧನಾನಂತರ ಬಿಎಸ್‌ಪಿಯ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಕಾನ್ಷಿರಾಮ್ ಅವರು ಯಲಹಂಕದಲ್ಲಿದ್ದ ಕೃಷ್ಣಪ್ಪನವರ ಮನಗೆ ಬಂದು ಇಂದಿರಾ ಮತ್ತು ಅವರ ಇಬ್ಬರು ಮಕ್ಕಳು ಶಾಲಿನಿ, ಸೀಮಾ ಅವರಿಗೆ ಸಾಂತ್ವನ ಹೇಳಿದರು. ತಕ್ಷಣದ ಅಗತ್ಯಗಳಿಗೆ ಎಂಬ ಕಾರಣದಿಂದಲೋ ಏನೋ ಎರಡು ಲಕ್ಷ ರೂಪಾಯಿಗಳನ್ನು ಇಂದಿರಾ ಅವರ ಕುಟುಂಬಕ್ಕೆ ನೀಡಿದ್ದರು. ಆದರೆ ಇಂದಿರಾ ಅವರು ನನಗೀಗ ಸರ್ಕಾರಿ ನೌಕರಿ ಇರುವ ಕಾರಣ ನೀಡಿ, ಅದನ್ನು ಕೃಷ್ಣಪ್ಪನವರ ಹೆಸರಿನಲ್ಲಿ ಮುಂದೆ ಸ್ಥಾಪಿಸಿದ ಟ್ರಸ್ಟ್ನ ಹೆಸರಿನಲ್ಲಿ ನಡೆಸುವ ಕರ‍್ಯಕ್ರಮಗಳಿಗೆ ಬಳಸಿಕೊಳ್ಳಲಾಗುವುದು ಎಂದು ಹೇಳಿ ಆ ಹಣವನ್ನು ಒಪ್ಪಿಕೊಂಡಿದ್ದರು. ಅದರಂತೆ ಕಾನ್ಷಿರಾಮ್ ಅವರು ನೀಡಿದ ಹಣ, 1997ರಲ್ಲಿ ಸ್ಥಾಪಿಸಿದ ಪ್ರೊ.ಬಿ. ಕೃಷ್ಣಪ್ಪ ಟ್ರಸ್ಟ್ನಲ್ಲಿ ಮೂಲಧನವಾಗಿ ಉಳಿದಿದೆ. ಕೃಷ್ಣಪ್ಪನವರ ಆಶಯದಂತೆ ಕರ‍್ಯಕ್ರಮಗಳನ್ನು ನಿರ್ವಹಿಸಿಕೊಂಡು ಕಳೆದ 24 ವರ್ಷಗಳಿಂದ ಬರುತ್ತಿದ್ದೇವೆ.

ಕೃಷ್ಣಪ್ಪನವರು ಕಾಲವಾದ ಎರಡು ತಿಂಗಳಲ್ಲಿ ಡಿಎಸ್‌ಎಸ್‌ನ ಅವರ ಅನುಯಾಯಿಗಳಲ್ಲಿ ನಾನು ಮತ್ತು ಇಂದಿರಾ ಮನವಿ ಮಾಡಿ ಕೃಷ್ಣಪ್ಪನವರ ಹೆಸರಿನಲ್ಲಿ ಟ್ರಸ್ಟ್ ಸ್ಥಾಪಿಸುವ ಬಗ್ಗೆ ಬೆಂಗಳೂರಿನಲ್ಲಿ ಪೂರ್ವಭಾವಿ ಸಭೆಯನ್ನು ಅರ್ಕೇಶ್ ಇದ್ದ ಸಿಆರ್‌ಪಿಎಫ್‌ನಲ್ಲಿನ ಒಂದು ಸಭಾಂಗಣದಲ್ಲಿ ಕರೆದಿದ್ದೆವು. ಆ ಸಭೆಗೆ ಸಾಕಷ್ಟು ಜನ ಬಾರದಿದ್ದರಿಂದ ಮತ್ತೊಂದು ಬಾರಿ ಎಲ್ಲರಿಗೂ ತಿಳಿಹೇಳಿ 9 ಅಥವಾ 11 ಜನರಿರುವ ಒಂದು ಟ್ರಸ್ಟ್ ಸ್ಥಾಪಿಸುವ ಬಗ್ಗೆ ಮತ್ತೆ ಸಭೆ ಕರೆದೆವು. ಎರಡನೇ ಸಭೆಯಲ್ಲಿ ಬಂದವರ ಅಭಿಪ್ರಾಯ ಪಡೆದು 11 ಜನರಲ್ಲಿ ದಲಿತ ಹೋರಾಟಗಾರರು, ಕೃಷ್ಣಪ್ಪನವರ ಕುಟುಂಬ ಮತ್ತು ಅವರ ಸಹಪಾಠಿಗಳನ್ನು ಸೇರಿದಂತೆ ಟ್ರಸ್ಟ್ ಸದಸ್ಯರ ಹೆಸರುಗಳನ್ನು ಅಂತಿಮಗೊಳಿಸಿದೆವು.

ನಾನು ಮತ್ತು ಇಂದಿರಾ ಮ್ಯಾನೇಜಿಂಗ್ ಟ್ರಸ್ಟಿಗಳು. ಕೃಷ್ಣಪ್ಪನವರ ಸಹಪಾಠಿಗಳಾಗಿದ್ದ ಆರ್. ನಾಗರಾಜ್ ಮತ್ತು ಕೃಷ್ಣಪ್ಪನವರ ಕಿರಿಯ ಸಹೋದರ ಬಿ. ಮಾರುತಿ, ನಮ್ಮ ಸಹೋದರ ಸಿ. ತಿಪ್ಪಣ್ಣ ಮತ್ತು ಉಳಿದಂತೆ ಡಿಎಸ್‌ಎಸ್‌ನಲ್ಲ್ಲಿದ್ದ ಕೃಷ್ಣಪ್ಪನವರ ಅನುಯಾಯಿಗಳಾದ ಚಿತ್ರದುರ್ಗದ ಜಯಣ್ಣ, ಶ್ರೀಧರ ಕಲಿವೀರ, ಮಾವಳ್ಳಿ ಶಂಕರ್, ಬಿಎಸ್‌ಪಿಯಲ್ಲಿದ್ದ ಮಾರಸಂದ್ರದ ಮುನಿಯಪ್ಪನವರ ಹೆಸರುಗಳನ್ನು ಅಂತಿಮಗೊಳಿಸಿದ್ದೆವು. ಎರಡು ಬಾರಿ ಎಲ್ಲರೂ ಸೇರಿ ನೋಂದಾಯಿಸಲು ಸಬ್ ರಿಜಿಸ್ಟಾçರ್ ಆಫೀಸಿಗೆ ಬರುವಂತೆ ದಿನಾಂಕ ನಿಗದಿ ಮಾಡಿದ್ದರೂ ಕೆಲವರು ಕೊನೆಯವರೆಗೂ ಬಾರದ ಕಾರಣ ಬಂದವರಲ್ಲಿ ಏಳು ಜನರಿರುವ ಟ್ರಸ್ಟ್ವೊಂದನ್ನು ದಿನಾಂಕ 28-11-97ರಲ್ಲಿ ಸ್ಥಾಪಿಸಿದೆವು. ಕೃಷ್ಣಪ್ಪನವರ ಆಶಯಗಳನ್ನು ಟ್ರಸ್ಟಿನ ಧ್ಯೇಯೋದ್ದೇಶಗಳಲ್ಲಿ ಉಲ್ಲೇಖಿಸಿ ನೊಂದಾಯಿಸಿದೆವು. ಅಂದಿನಿಂದ ಇಂದಿನವರೆಗೆ ಸುಮಾರು 24 ವರ್ಷಗಳಲ್ಲಿ ರಾಜ್ಯದಾದ್ಯಂತ ದಲಿತ ಹೋರಾಟಗಳಿಗೆ ಒತ್ತಾಸೆಯಾಗಿ, ಸಮಾನತೆ ಸಹೋದರತೆ ಸಾರುವ ಮಾನವೀಯ ಹೋರಾಟಗಳಲ್ಲಿ ಭಾಗವಹಿಸುತ್ತಾ, ಅಂತರ್ಜಾತಿ-ಅಂತರ್‌ಮತೀಯ ಮತ್ತು ಸರಳ ಮದುವೆಗಳನ್ನು ಮಾಡುತ್ತಾ ಜೊತೆಗೆ, ಕೃಷ್ಣಪ್ಪನವರು ಬರೆದಿದ್ದ ಹೋರಾಟದ ಕವನ ಮತ್ತು ವೈಚಾರಿಕ ಲೇಖನಗಳನ್ನು ಪ್ರಕಟಿಸಿ ಜನರಿಗೆ ತಲುಪಿಸುತ್ತಾ ಇಂದಿಗೂ ಜನಪರ ಚಳುವಳಿಗಳಲ್ಲಿ ಕೃಷ್ಣಪ್ಪ ಟ್ರಸ್ಟ್ ಸಕ್ರಿಯವಾಗಿದೆ. ಟ್ರಸ್ಟ್ನ ಕರ‍್ಯಕ್ರಮಗಳ ಭಾಗವಾದ ಕೃಷ್ಣಪ್ಪ ಸಮಾಧಿ ಸ್ಥಳ ಉದ್ಘಾಟನೆಗೆ ಬಿಎಸ್‌ಪಿಯ ಕಾನ್ಷಿರಾಮ್ ಅವರು ಹಿರಿಯ ನ್ಯಾಯವಾದಿ ಮತ್ತು ಮಾಜಿಮಂತ್ರಿಗಳಾಗಿದ್ದ ಎಲ್.ಜಿ. ಹಾವನೂರ ಅವರು, ಮಾಜಿಮಂತ್ರಿಗಳಾಗಿದ್ದ ಕಾಗೋಡು ತಿಮ್ಮಪ್ಪ ಅವರು 1997ರಲ್ಲಿ ಬಂದು ಉದ್ಘಾಟಿಸಿದ್ದರು. ಅಂದಿನಿಂದ ಇಂದಿನವರೆಗೆ ನೂರಾರು ಸಾಹಿತ್ಯ, ಸಂಸ್ಕೃತಿ, ನಾಟಕ, ಹೋರಾಟಗಳ ಸಭೆ ಸಮಾರಂಭಗಳನ್ನು ಕೃಷ್ಣಪ್ಪ ಸಮಾಧಿ ಸ್ಥಳದಲ್ಲಿ ಸಂಘಟಿಸುತ್ತಾ ಬಂದಿದೆ. ಮಂತ್ರಿಗಳು, ಮುಖ್ಯಮಂತ್ರಿಗಳು, ರಾಜ್ಯಪಾಲರಾದಿಯಾಗಿ ಜೊತೆಗೆ ನೂರಾರು ದಲಿತ ಹೋರಾಟಗಾರರು, ರಾಜಕಾರಣಿಗಳು ಅನೇಕ ಪ್ರಗತಿಪರರು, ರೈತ ಹೋರಾಟಗಾರರು ಗ್ರಾಮೀಣ ಜನರು ಸಮಾಧಿ ಸ್ಥಳದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುತ್ತಾರೆ.

2017ರಲ್ಲಿ ಸಮಾಧಿ ಸ್ಥಳದಲ್ಲಿ ಸರ್ಕಾರದ ಸಹಾಯದಿಂದ ಕೃಷ್ಣಪ್ಪ ಸ್ಮಾರಕ ಭವನ ನಿರ್ಮಿಸಿದ್ದು, ಅಲ್ಲಿ ಲೈಬ್ರರಿ ಮತ್ತು ಸ್ಮರಣಲೋಕವನ್ನು ಕೃಷ್ಣಪ್ಪನವರ ಹೋರಾಟದ ವಿವರಗಳನ್ನು ಒಳಗೊಂಡಂತೆ ಕಲೆ ಹಾಕಿದೆ. ಅನೇಕ ಪ್ರಗತಿಪರ ಕರ‍್ಯಕ್ರಮಗಳು ಜನಪರ ಗ್ರಾಮೀಣ ಜನರು ಅದರ ಸದುಪಯೋಗ ಪಡೆಯುತ್ತಿರುವುದು ಸಂತೋಷದ ಸಂಗತಿಯಾಗಿದೆ.

ಕೃಷ್ಣಪ್ಪನವರು ತೀರಿದ ಎರಡು ತಿಂಗಳಲ್ಲಿ ಯಲಹಂಕದಲ್ಲಿನ ಪ್ರಗತಿಪರರೊಡನೆ ಜೊತೆಗೂಡಿ ಕೃಷ್ಣಪ್ಪನವರ ಸ್ಮರಣ ಕರ‍್ಯಕ್ರಮ ಆಯೋಜಿಸಿದ್ದೆವು. ಆ ಸಭೆಗೆ ನಮ್ಮ ನಗರಸಭೆಯ ಸದಸ್ಯರು ಮತ್ತು ಅನೇಕ ಪ್ರಗತಿಪರರು ಕೈಜೋಡಿಸಿದ್ದರು. ಸಭೆಗೆ ಡಿಎಸ್‌ಎಸ್ ನಾಯಕರು ಮತ್ತು ಅಂದಿನ ವಿಧಾನಸಭಾ ಅಧ್ಯಕ್ಷರಾಗಿದ್ದ ಡಿ. ಮಂಜುನಾಥ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಕೃಷ್ಣಪ್ಪನವರ ಹೋರಾಟ ಮತ್ತು ತ್ಯಾಗಗಳ ಬಗ್ಗೆ ನುಡಿನಮನ ಸಲ್ಲಿಸಿದ್ದರು.

ನಮ್ಮ ಊರಿನಿಂದ ಒಂದು ದೊಡ್ಡ ದಂಡೇ ಬ್ಯಾಂಡ್‌ಸೆಟ್ ಜೊತೆಗೆ ಬಂದಿದ್ದರು. ಈ ಸಂದರ್ಭದಲ್ಲಿ ಬಸವಲಿಂಗಪ್ಪನವರ ಸಮಾಧಿ ಸ್ಥಳದಿಂದ ಯಲಹಂಕದಲ್ಲಿ ನಡೆಸುತ್ತಿದ್ದ ಕೃಷ್ಣಪ್ಪನವರ ಸ್ಮರಣ ಸಮಾರಂಭದವರೆಗೆ ಮೆರವಣಿಗೆ ಮಾಡಿಕೊಂಡು ಬಂದು ಕೃಷ್ಣಪ್ಪನವರ ಬದುಕು, ಹೋರಾಟ, ಡಿಎಸ್‌ಎಸ್ ಸಂಘಟನೆಯನ್ನು ಸ್ಥಾಪಿಸಿ ಹೋರಾಟ ಮಾಡಿದ ವಿವಿಧ ವಿಷಯಗಳ ಬಗ್ಗೆ ಅಂದಿನ ಸಭೆಯಲ್ಲಿ ಭಾಗವಹಿಸಿದವರೆಲ್ಲರೂ ಮಾತನಾಡಿ ಕೃಷ್ಣಪ್ಪನವರ ಅಗಲಿಕೆಗೆ ಸಂತಾಪ ವ್ಯಕ್ತಪಡಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಸಿದ್ಧಾಂತ ಮತ್ತು ಪತ್ರಿಕೋದ್ಯಮ

Published

on

  • ಹರ್ಷಕುಮಾರ್‌ ಕುಗ್ವೆ, ಪತ್ರಕರ್ತ ಮತ್ತು ಆಕ್ಟಿವಿಸ್ಟ್

ಇದು ಸುಮಾರು 2002-03ರ ಸಂದರ್ಭ. ಶಿವಮೊಗ್ಗದಲ್ಲಿ ನಾವು ಹೋರಾಟಗಳಲ್ಲಿ ಸಕ್ರಿಯವಾಗಿದ್ದ ಕಾಲ. ಒಬ್ಬ ಪತ್ರಕರ್ತ ಮಿತ್ರರೊಂದಿಗೆ ಹೀಗೇ ಚರ್ಚೆ ನಡೆಯುತ್ತಿತ್ತು. ಅವರು ಪತ್ರಿಕೋದ್ಯಮದ ನ್ಯೂಟ್ರಾಲಿಟಿ ಕುರಿತು ಮಾತಾಡುತ್ತಾ, ʼನಾವು ಪತ್ರಕರ್ತರು ನಿಮ್ಮ ರೀತಿ ಯೋಚನೆ ಮಾಡೋದಕ್ಕೆ ಆಗಲ್ಲ. ನಾವು ಯಾವತ್ತೂ ಯಾವುದೇ ಸಿದ್ಧಾಂತಕ್ಕೆ ವಾಲಿಕೊಳ್ಳದೇ ತಟಸ್ಥತೆ ಕಾಪಾಡಬೇಕಾಗುತ್ತದೆʼ ಎಂದು ಹೇಳಿದರು. ʼಅವರ ಜೊತೆ ನಾನು ವಾದಿಸಿದೆ.

ಸರ್, ಸುಳ್ಳನ್ನೇ ಬಂಡವಾಳ ಮಾಡಿಕೊಂಡ ಸಿದ್ಧಾಂತಗಳು ರಾರಾಜಿಸುವಾಗ ಸತ್ಯವನ್ನು ಹುಡುಕಲು ಸಹ ಸಿದ್ಧಾಂತದ ಸಹಾಯ ಬೇಕಾಗುತ್ತದೆ. ಯಾವ ವ್ಯಕ್ತಿಯೂ ಸಿದ್ಧಾಂತದ ಹೊರಗಾಗಿ ಇರಲು ಸಾಧ್ಯವಿಲ್ಲ. ನನಗೆ ಸಿದ್ದಾಂತವೇ ಇಲ್ಲ ಎನ್ನುವ ವ್ಯಕ್ತಿಯನ್ನು ಕೂಡಾ ಅವನಿಗೆ ತಿಳಿದೋ ತಿಳಿಯದೆಯೋ ಒಂದಲ್ಲಾ ಒಂದು ಸಿದ್ದಾಂತ ಇಲ್ಲವೇ ಹಲವು ಸಿದ್ಧಾಂತಗಳು ನಿರ್ದೇಶಿಸುತ್ತಿರುತ್ತವಲ್ಲ.. ʼ ಎಂದ ನನ್ನ ಮಾತಿಗೆ ನಮಗೆ ಪತ್ರಕರ್ತರಿಗೆ ಹಾಗೆ ಯೋಚಿಸಲು ಬರುವುದಿಲ್ಲ. ನೀವು ಎಡ ಪಂಥ ಅಂತೀರಿ, ಅವರು ಬಲಪಂಥ ಅಂತಾರೆ, ನಾವು ಇವೆರಡರ ನಡುವೆ ಸತ್ಯ ಹುಡುಕ್ತೀವಿʼ ಎಂದೆಲ್ಲಾ ಹೇಳಿದರು. ಕೊನೆಗೆ ಯಾರೂ ರಾಜಿಯಾಗಲಿಲ್ಲ.

ಇದಾಗಿ ಹದಿನೈದು ವರ್ಷಗಳ ನಂತರ, 2019ರಲ್ಲಿ ಅದೇ ಪತ್ರಕರ್ತ ಸ್ನೇಹಿತರು ನಮ್ಮ ಜೊತೆ ಕೆಲಸ ಮಾಡುತ್ತಿದ್ದರು. ಅವರು ನರೇಂದ್ರ ಮೋದಿ ಸರ್ಕಾರದ ಆರ್ಥಿಕ ವಂಚನೆಗಳನ್ನು ಅದ್ಭುತ ರೀತಿಯಲ್ಲಿ ಅಂಕಿಅಂಶಗಳ ಸಮೇತ ಬಯಲು ಮಾಡುತ್ತಿದ್ದುದು ಕಂಡು ನನಗೆ ಅಚ್ಚರಿ ಮತ್ತು ಸಂತೋಷವಾಗಿತ್ತು. ಅಂದು ಅವರು ನಿಜಕ್ಕೂ ಸತ್ಯದ ಪರವಾಗಿದ್ದರು. ಆದರೆ ಅವರ ಬರೆಹಗಳನ್ನು ಯಾರಾದರೂ ಬಲಪಂಥೀಯರು ಓದಿದರೆ ಅವರಿಗೆ ಖಂಡಿತಾ ಇವರು ʼಎಡಪಂಥೀಯ ಸಿದ್ಧಾಂತಿʼ, ʼನಗರ ನಕ್ಸಲ್ʼ ಎಂದೆಲ್ಲಾ ಸುಲಭವಾಗಿ ಹಣೆಪಟ್ಟಿ ಕಟ್ಟಬಹುದಿತ್ತು. ಆದರೆ ಆ ಪತ್ರಕರ್ತ ಸ್ನೇಹಿತರು ನಿಜಕ್ಕೂ ಈ ದೇಶದ ಭವಿಷ್ಯದ ಬಗ್ಗೆ ತುಂಬಾ ಆತಂಕಗೊಂಡು, ಕಾಳಜಿಯಿಂದ ಕೆಲಸ ಮಾಡುತ್ತಿದ್ದರು. ಕೊನೆಗೆ ಅವರಿಗೂ ಸಹ ಅವರು ಹಿಂದೆ ಹೇಳಿದ್ದ ರೀತಿಯಲ್ಲಿ ತಟಸ್ಥವಾಗಿ ಪತ್ರಿಕೋದ್ಯಮ ನಡೆಸುವುದು ಸಾಧ್ಯವಿಲ್ಲ ಎಂಬ ಅರಿವಾಗಿರಬಹುದು ಎಂದುಕೊಂಡೆ. ಹೌದು ಪತ್ರಕತ್ರರಾದವರು ಮಾಡಲು ಇರುವ ಬಹಳ ಕೆಲಸಗಳ ನಡುವೆಯೂ ಅವರು ಅದ್ಯತೆಯನ್ನು ಗುರುತಿಸಿಕೊಂಡಿದ್ದರು.

ಪತ್ರಿಕೋದ್ಯಮದ ಬಗ್ಗೆ ಮಾತಾಡುವಾಗ ನಾವು ಒಂದು ಪ್ರಾಥಮಿಕ ಸಂಗತಿಯನ್ನು ತಿಳಿದುಕೊಳ್ಳಬೇಕು. ನಮ್ಮ ದೇಶದಲ್ಲಿ ಪತ್ರಿಕೋದ್ಯಮ ಆರಂಭವಾದ ಸಂದರ್ಭದಲ್ಲಿ ಯಾವೆಲ್ಲಾ ಭಾರತೀಯರು ಪತ್ರಿಕೆಗಳನ್ನು ಹೊರತರುತ್ತಿದ್ದರೋ ಅವರೆಲ್ಲರೂ ಕಟು ಸಿದ್ಧಾಂತಿಗಳಾಗಿದ್ದರು. ಸಾಮ್ರಾಜ್ಯವಾದದ ವಿರುದ್ಧದ ಸಿದ್ದಾಂತ ಅವರೆಲ್ಲರನ್ನು ಮುನ್ನಡೆಸುತ್ತಿತ್ತು. ಬಹುತೇಕ ಅವರೆಲ್ಲರೂ ಸ್ವಾತಂತ್ರ್ಯ ಹೋರಾಟಗಾರರು ಇಲ್ಲವೇ ಸ್ವಾಭಿಮಾನ ಚಳವಳಿಯ ಹೋರಾಟಗಾರರು, ನಾಯಕರು ಆಗಿದ್ದರು. ಅಂತಹ ಸ್ಪಷ್ಟ ಸೈದ್ಧಾಂತಿಕ ಬುನಾದಿಯಿಟ್ಟುಕೊಂಡು ಅವರೆಲ್ಲಾ ಬ್ರಿಟಿಷರ ವಿರುದ್ಧ ಪತ್ರಿಕೋದ್ಯಮ ನಡೆಸದಿದ್ದರೆ ಈ ದೇಶದ ಪತ್ರಿಕೋದ್ಯಮದ ಇತಿಹಾಸ ಅತ್ಯಂತ ಟೊಳ್ಳಾದ, ಬೂಸಾ ಇತಿಹಾಸವಾಗುತ್ತಿತ್ತು.

ಕೆಲ ಬ್ರಿಟಿಷ್ ಪತ್ರಕರ್ತರು ಹೇಗೆ ಬ್ರಿಟಿಷ್ ಅಧಿಕಾರಿಗಳ ಬೆಡ್ ರೂಮ್ ಸ್ಟೋರಿಗಳನ್ನು ಚಪ್ಪರಿಸಿಕೊಂಡು ಅದನ್ನೇ ಪತ್ರಿಕೋದ್ಯಮ ಎಂದು ಬೀಗುತ್ತಿದ್ದರೋ ಅಷ್ಟರಲ್ಲೇ ಭಾರತೀಯ ಪತ್ರಿಕೋದ್ಯಮ ಉಳಿದುಬಿಡುತ್ತಿತ್ತು. ಆದರೆ ಹೀಗೆ ಆಗಲು ಬಿಡದೇ ಉದಾತ್ತ ಧ್ಯೇಯಗಳ ಮೂಲಕ ದೇಶದ ಪತ್ರಿಕೋದ್ಯಮ ಬೆಳೆಸಿದ 19ನೆಯ ಶತಮಾನದ ಅಂತಹ ಧೀಮಂತ ಪತ್ರಕರ್ತರು ಹಲವರು. ಸುರೇಂದ್ರ ನಾಥ್ ಬ್ಯಾನರ್ಜಿ (ಬೆಂಗಾಲಿ ಪತ್ರಿಕೆ- 1879) ಪತ್ರಕರ್ತರಾಗಿ ಕೆಲಸ ಮಾಡುತ್ತಲೇ ಸತ್ಯ ಹೇಳಿದ ಕಾರಣಕ್ಕೆ ಬ್ರಿಟಿಷ್ ಸರ್ಕಾರ ಅವರನ್ನು ವರ್ನಾಕ್ಯುಲರ್ ಪ್ರೆಸ್ ಕಾಯ್ದೆಯ ಅಡಿ ಜೈಲಿಗಟ್ಟಿತ್ತು. ಸಂವಾದ ಕೌಮುದಿ ಎಂಬ ಪತ್ರಿಕೆ ನಡೆಸುತ್ತಿದ್ದ ರಾಜಾರಾಮ ಮೋಹನ್ ರಾಯ್ ಒಬ್ಬ ಸ್ಪಷ್ಟ ವಿಚಾರವಾದಿಯಾಗಿದ್ದರು.

ಅವರು ಈ ದೇಶದ ಅನಿಷ್ಟಗಳ ಕುರಿತೇ ತಮ್ಮ ಪತ್ರಿಕೆಯಲ್ಲಿ ಬರೆಯುತ್ತಾ ಹೋದರು. ಇದೇ ಕೆಲಸವನ್ನು ಮಹಾರಾಷ್ಟ್ರದಲ್ಲಿ ಮರಾಠಿ ಪತ್ರಿಕೆ ಆರಂಭಿಸಿದ ಜಂಬೇಕರ್ ಮಾಡಿದರು, ಅವರು ತಮ್ಮ ದರ್ಪಣ್ ಪತ್ರಿಕೆಯ ಮೂಲಕ ಸಾಮಾಜಿಕ ಅನಿಷ್ಟಗಳು ಕುರಿತು ಜಾಗೃತಿ ಮೂಡಿಸಿದರು- ಇವರನ್ನು ಮರಾಠಿ ಪತ್ರಿಕೋದ್ಯಮದ ಪಿತಾಮಹ ಎಂದು ಕರೆಯಲಾಗುತ್ತದೆ. ಬಂಗಾಳದಲ್ಲಿ ಹರೀಶ್ಚಂದ್ರ ರಾಯ್ ಎಂಬುವವರು ಬಂಗದರ್ಶನ್ ಎಂಬ ಪತ್ರಿಕೆ ತಂದರು; ಗುಜರಾತಿಯಲ್ಲಿ ʼಬಾಂಬೆ ಸಮಾಚಾರ್ʼ ಪತ್ರಿಕೆ ಆರಂಭಿಸಿದ ಫರ್ದುನ್ಜಿ ಮರ್ಜ್ ಬಾನ್ ಎಂಬುವವರು ಸಹ ಪತ್ರಿಕೆಯ ಮೂಲಕ ಸಮಾಜ ಸುಧಾರಣೆಗೆ ಒತ್ತು ಕೊಟ್ಟರು. ಇನ್ನು ಸ್ವಾತಂತ್ರ್ಯ ಹೋರಾಟಗಾರರಲ್ಲಿ ಬಾಲಗಂಗಾಧರ ತಿಲಕ್ ಕೇಸರಿ ಮತ್ತು ಮರಾಟಾ ಪತ್ರಿಕೆ ಹೊರಡಿಸುತ್ತಿದ್ದರು, ಗಾಂದೀಜಿಯವರು ಆಫ್ರಿಕಾದಲ್ಲಿದ್ದಾಗಲೇ ಇಂಡಿಯನ್ ಒಪಿನಿಯನ್ ಪತ್ರಿಕೆ ನಡೆಸುತ್ತಿದ್ದರೆ, ಭಾರತಕ್ಕೆ ಬಂದ ಮೇಲೆ ಯಂಗ್ ಇಂಡಿಯಾ ಮತ್ತು ಹರಿಜನ್ ಎಂಬ ಪತ್ರಿಕೆಗಳನ್ನು ಹೊರತಂದರು,

ಸುಭಾಷ್ ಚಂದ್ರ ಬೋಸ್ ಅವರು ಸ್ವರಾಜ್ ಪತ್ರಿಕೆಯ ಸಂಪಾದಕರಾಗಿದ್ದರು, ಲಾಲಾ ಲಜಪತ್ ರಾಯ್ ಅವರು ದ ಟ್ರಿಬ್ಯೂನ್ ಎಂಬ ಇಂಗ್ಲಿಷ್ ಪತ್ರಿಕೆ ತಂದರು, ಜೊತೆಗೆ ವಂದೆ ಮಾತರಂ ಎಂಬ ಉರ್ದು ಪತ್ರಿಕೆಯನ್ನೂ ಪ್ರಕಟಿಸುತ್ತಿದ್ದರು- ಇವುಗಳ ಮೂಲಕ ಸ್ವದೇಶಿ ಚಿಂತನೆಯನ್ನು ಅಥವಾ ಸಿದ್ಧಾಂತವನ್ನು ಪ್ರಚುರಪಡಿಸಿದರು, ಹೋಂರೂಲ್ ಚಳವಳಿಯ ಮುಂದಾಳು ಅನಿಬೆಸೆಂಟ್ ಅವರು ನ್ಯೂ ಇಂಡಿಯಾ ಪತ್ರಿಕೆ ತಂದರು, ಇನ್ನು ಮದನ್ ಮೋಹನ್ ಮಾಳವೀಯ ಅವರು ಮೋತಿಲಾಲ್ ನೆಹರೂ ಜೊತೆ ಸೇರಿಕೊಂಡು ದ ಲೀಡರ್ ಎಂಬ ಪತ್ರಿಕೆ ತಂದರೆ, ನಂತರ ಹಿಂದೂಸ್ತಾನ್ ಟೈಮ್ಸ್ ಪತ್ರಿಕೆಯನ್ನೂ ಪುನರುಜ್ಜೀವಗೊಳಿಸಿದರು. ಇನ್ನು ಡಾ. ಬಿ.ಆರ್. ಅಂಬೇಡ್ಕರ್ ಅವರು ʼಅಸ್ಪೃಶ್ಯರಿಗೆ ಈ ದೇಶದಲ್ಲಿ ಪತ್ರಿಕೆಯಿಲ್ಲʼ ಎಂದು ಘೋಷಿಸಿ ಮೊದಲಿಗೆ ಶಾಹು ಮಹಾರಾಜರ ಬೆಂಬಲದಿಂದ ಮೂಕನಾಯಕ ಪತ್ರಿಕೆ (1920) ತಂದರು; ನಂತರ ಬಹಿಷ್ಕೃತ ಭಾರತ (1927), ನಂತರ ಸಮತಾ (1928), ನಂತರ ಜನತಾ (1930) ಹಾಗೂ ಪ್ರಬುದ್ಧ ಭಾರತ (1956) ಪತ್ರಿಕೆಗಳನ್ನು ಹೊರಡಿಸಿ ನಿರಂತರವಾಗಿ ಅವುಗಳಲ್ಲಿ ಬರೆಯುತ್ತಾ ತಾವೊಬ್ಬ ಧೀಮಂತ ಪತ್ರಕರ್ತ ಎಂಬುದನ್ನೂ ನಿರೂಪಿಸಿದ್ದರು.

ಇವರನ್ನೆಲ್ಲಾ ಹೊರಗಿಟ್ಟು ಕೇವಲ ಬ್ರಿಟಿಷರು ತಂದ ಬೆಂಗಾಲ್ ಗೆಜೆಟ್ ನಂತವುಗಳನ್ನು ಮಾತ್ರವೇ ಭಾರತದ ಪತ್ರಿಕೋದ್ಯಮದ ಇತಿಹಾಸ ಎಂದು ಹೇಳಲು ಬರುತ್ತದೆಯೇ? ಈ ದೇಶದ ಪತ್ರಿಕೋದ್ಯಮದ ಇತಿಹಾಸದ ಸೈದ್ಧಾಂತಿಕ ಅಡಿಪಾಯ ಅತ್ಯಂತ ಭದ್ರವಾಗಿತ್ತು ಎಂಬುದಕ್ಕೆ ಇವೆಲ್ಲಾ ಸಾಕ್ಷಿಯಲ್ಲವೆ? ಅಲ್ಲಿ ಎಡಬಿಡಂಗಿತನಕ್ಕೆ, ಸೊ ಕಾಲ್ಡ್ ತಟಸ್ಥತೆಗೆ ಯಾವುದೇ ಅವಕಾಶವಿರಲಿಲ್ಲ. ಈ ದೇಶವನ್ನು ಕಾಡುತ್ತಿದ್ದ ಸಾಮ್ರಾಜ್ಯಶಾಹಿ ಮತ್ತು ಬ್ರಾಹ್ಮಣಶಾಹಿ ಶಕ್ತಿಗಳನ್ನು ನೇರವಾಗಿ ಎದುರಿಸಿಯೇ ಭಾರತದ ಪತ್ರಿಕೋದ್ಯಮ ನಡೆದುಕೊಂಡುಬಂದಿದೆ ಎಂಬುದಕ್ಕೆ ಮೇಲಿನ ಉದಾಹರಣೆಗಳೇ ಸಾಕ್ಷಿ.

ಸ್ವಾತಂತ್ರ್ಯಾನಂತರದಲ್ಲಿ, ನಮ್ಮ ಕರ್ನಾಟಕದಲ್ಲೇ ನಾವು ಯಾರನ್ನೆಲ್ಲಾ ಇಂದು ಧೀಮಂತ ಪತ್ರಕರ್ತರೆಂದು ಪರಿಗಣಿಸಿದ್ದೇವೆಯೋ, ಯಾರನ್ನೆಲ್ಲಾ ಆದರ್ಶ ಎಂದು ನೋಡುತ್ತೇವೆಯೋ ಅವರೆಲ್ಲರೂ ಅತ್ಯಂತ ಸ್ಪಷ್ಟ ಮತ್ತು ದೃಢವಾದ ಸಿದ್ಧಾಂತಿಗಳೇ ಆಗಿದ್ದರು ಎಂಬುದನ್ನು ಮರೆಯಬಾರದು. ಕರ್ನಾಟಕದ ಪತ್ರಿಕೋದ್ಯಮಕ್ಕೇ ಹೊಸ ಮೆರಗು ತಂದು ಸಂಚಲನ ಮೂಡಿಸಿದ ಪಿ. ಲಂಕೇಶ್ ಅವರು ಕಡಿಮೆ ಸಿದ್ಧಾಂತಿಯೇ? ಸ್ಪಷ್ಟ ಸೈದ್ಧಾಂತಿಕ ತಳಹದಿಯ ಪತ್ರಿಕೋದ್ಯಮವೇ ಅವರ ಆಕ್ಟಿವಿಸಂ ಆಗಿತ್ತು ಮಾತ್ರವಲ್ಲ ಪತ್ರಿಕೋದ್ಯಮದ ಮೂಲಕ ಸಾಮಾಜಿಕ ರಾಜಕೀಯ ಬದಲಾವಣೆಯನ್ನೂ ಮಾಡಲು ಸಾಧ್ಯ ಎಂದು ಪಿ ಲಂಕೇಶ್ ಒಂದು ಮಾದರಿಯನ್ನೇ ಸೃಷ್ಟಿಸಿದರು. ಅದು ಸಾಧ್ಯವಾಗಿದ್ದೇ ಅವರ ಕಟಿಬದ್ಧ ಸೈದ್ಧಾಂತಿಕ ನಿಲುವಿನಿಂದ.

ನಾಡು ಕಂಡ ಮತ್ತೊಬ್ಬ ಧೀಮಂತ ಪತ್ರಕರ್ತ ವಡ್ಡರ್ಸೆ ರಘುರಾಮ್ ಶೆಟ್ಟಿ ಕೂಡಾ ಗಟ್ಟಿ ತಾತ್ವಿಕ ನಿಲುವುಗಳ ಮೂಲಕ ನಾಡಿನ ಜನರನ್ನು ತಲುಪಿದರು. ಇನ್ನು 70-80ರ ದಶಕಗಳಲ್ಲಿ ಭಾರತೀಯ ಪತ್ರಿಕೋದ್ಯಮದ ಧೀಮಂತ ಪರಂಪರೆಯಲ್ಲಿ ಸಾಗಿದ ಹಲವಾರು ಕನ್ನಡ ಪತ್ರಿಕೆಗಳಿದ್ದವು- ಸುದ್ದಿ ಸಂಗಾತಿ, ಶೂದ್ರ, ಪಂಚಮ, ಸಮುದಾಯ, ಸಂಕ್ರಮಣ ಮುಂತಾದ ನಿಯತಕಾಲಿಕೆಗಳು ಕನ್ನಡಿಗರ ಅರಿವಿನ ವಿಸ್ತರಣೆಯಲ್ಲಿ ಕಡಿಮೆ ಕೆಲಸ ಮಾಡಿವೆಯೇ? ಹಾಗಾದರೆ ಇವೆಲ್ಲವೂ ಖಚಿತ ಸೈದ್ದಾಂತಿಕತೆಯಿಂದಲೇ ನಡೆಯಲಿಲ್ಲವೇ?

ಇನ್ನು ಕಳೆದ ಕೆಲವು ದಶಕಗಳಲ್ಲಿ, ಅಗ್ನಿ, ಹಾಯ್ ಬೆಂಗಳೂರು, ಗೌರಿ ಲಂಕೇಶ್ ವಾರಪತ್ರಿಗಳೂ ತಮ್ಮ ಛಾಪು ಮೂಡಿಸಿದವು. ಪಿ ಲಂಕೇಶರ ಸ್ಪೂರ್ತಿಯಲ್ಲೇ ದೊಡ್ಡ ದೊಡ್ಡ ಭ್ರಷ್ಟಾಚಾರ ಪ್ರಕರಣಗಳನ್ನು ಅನಾವರಣಗೊಳಿಸಿದವು. ಇದ್ದುದರಲ್ಲಿ ರವಿ ಬೆಳಗರೆ ಎಡಬಿಡಂಗಿಯಾಗಿ ಕ್ರೈಂ, ಸೆಕ್ಸ್ ಗಳನ್ನ ಅಸ್ತ್ರವಾಗಿಸಿಕೊಂಡು ಟ್ಯಾಬ್ಲಾಯ್ಡ್ ಪತ್ರಿಕೋದ್ಯಮವನ್ನು ಹಳ್ಳ ಹಿಡಿಸಿದರೂ ಹಾಯ್ ಬೆಂಗಳೂರು ಸಹ ಅನೇಕ ಬ್ರಷ್ಟಾಚಾರ ಹಗರಣಗಳನ್ನು ಬಯಲು ಮಾಡಿದ್ದು ಸತ್ಯ.

ಯಾವನ್ನು ನಾವು ದಿನಪತ್ರಿಕೆಗಳು ಅಥವಾ ವೃತ್ತ ಪತ್ರಿಕೆಗಳು ಎನ್ನುತ್ತೇವೆಯೋ ಇವುಗಳ ಆದ್ಯತೆ ದಿನನಿತ್ಯದ ಸುದ್ದಿಗಳನ್ನು ಜನರಿಗೆ ತಲುಪುವುದು ಮಾತ್ರವಾಗಿದ್ದ ಕಾರಣ ಬಹಳ ಪತ್ರಿಕೆಗಳಲ್ಲಿ ಸೈದ್ಧಾಂತಿಕತೆ ದೊಡ್ಡ ವಿಷಯವಾಗಲಿಲ್ಲ. ಆದರೆ ಅಂತಹ ಕಡೆಗಳಲ್ಲಿ ಸಹ ದೊಡ್ಡ ದೊಡ್ಡ ಸಿದ್ಧಾಂತಿಗಳು ಹತ್ತಾರು ವರ್ಷಗಳ ಕಾಲ ಕೆಲಸ ಮಾಡಿದ್ದರು ಮತ್ತು ತಮ್ಮ ಖಚಿತ ಅಭಿಪ್ರಾಯಗಳನ್ನು ಆ ವೇದಿಕೆಗಳ ಮೂಲಕ ಜನರಿಗೆ ತಲುಪಿಸುತ್ತಾ ಬಂದಿದ್ದರೆಂಬುದನ್ನು ನಾವು ಮರೆಯಕೂಡದು.

ಈಗ ಹೇಳಿ, ನಮ್ಮ ಪತ್ರಿಕೋದ್ಯಮಕ್ಕೆ ಸಿದ್ಧಾಂತ ಬೇಡವೆ, ಪತ್ರಕರ್ತರಾಗಿರುವವರು ಸೈದ್ಧಾಂತಿಕ ಸ್ಪಷ್ಟತೆ ಹೊಂದಿರಬಾರದೆ? ಆಕ್ಟಿವಿಸ್ಟುಗಳು ಪತ್ರಕರ್ತರಾಗುವುದು ಅಪರಾಧವೆ? ಪತ್ರಿಕೋದ್ಯಮ ಆಕ್ಟಿವಿಸಂಗೆ ಪೂರಕವಾಗಿರಬಾರದೆ? ಇಂದು ಬ್ರಾಹ್ಮಣ್ಯದ ದಿಗ್ವಿಜಯ ಮತ್ತೊಮ್ಮೆ ನಿಜವಾಗುವ ಕರಾಳ ಛಾಯೆ ಇಡೀ ದೇಶವನ್ನು ಆವರಿಸಿಕೊಂಡಿರುವಾಗ, ಬಾಬಾಸಾಹೇಬರು ಎಚ್ಚರಿಸಿದ್ದ ಆ ʼಪ್ರತಿಕ್ರಾಂತಿʼ ತನ್ನ ಕಬಂಧಬಾಹುಗಳನ್ನು ಚಾಚಿಕೊಂಡ ಎಲ್ಲವನ್ನೂ ನೊಣೆಯುತ್ತಿರುವಾಗ, ಅಪರಾಧವೇ ಅಧಿಕಾರವಾಗಿ ದೇಶದ ಪ್ರಮುಖ ಸಂಸ್ಥೆಗಳೆಲ್ಲವನ್ನೂ ನುಂಗಿ ನೀರುಕುಡಿದು ತಮ್ಮ ಅಂಕೆಯಲ್ಲಿ ತಂದುಕೊಂಡು ಇಡೀ ದೇಶದ ಜನರಿಗೆ ಕರಾಳತೆ ದರ್ಶನ ಮಾಡುತ್ತಾ ಭ್ರಷ್ಟಾಚಾರದ ವ್ಯಾಖ್ಯಾನವನ್ನೇ ತಿರುಗುಮರುಗು ಮಾಡುತ್ತಿರುವಾಗ ಸೊ ಕಾಲ್ಡ್ ತಟಸ್ಥತೆಯ ಬದನೇಕಾಯಿಯನ್ನು ನೆಚ್ಚಿಕೊಳ್ಳದೇ ನಿರ್ಧಾರಿತ ಜನಾಂದೋಲನಗಳಿಗೆ ಪೂರಕವಾಗಿ ಪತ್ರಿಕೋದ್ಯಮ ಮತ್ತು ಪತ್ರಕರ್ತರಾದವರು ಜೊತೆಗೂಡುವುದು ಬೇಡವೇ?

‘ಬೇಡ’ ಎಂಬ ಅಭಿಪ್ರಾಯ ನಿಮ್ಮದಾಗಿದ್ದರೆ ನಿಮ್ಮ ಬಳಿ ಹೇಳಲು ನನಗೆ ಏನೂ ಉಳಿದಿಲ್ಲ. ನೀವು ನಿಮ್ಮದೇ ಸುಖಾಸನದಲ್ಲಿ ನೆಮ್ಮದಿಯಾಗಿ ಪವಡಿಸಬಹುದು, ನನಗೇನೂ ಅಭ್ಯಂತರವಿಲ್ಲ. (ಬರಹ- ಹರ್ಷಕುಮಾರ್‌ ಕುಗ್ವೆ, ಪತ್ರಕರ್ತ ಮತ್ತು ಆಕ್ಟಿವಿಸ್ಟ್)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending