ಅಂತರಂಗ
ನುಡಿಯ ಒಡಲು -09 | ನುಡಿ ಮತ್ತು ಮೆದುಳು
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2020/08/brain_language_suddidina.jpg&description=ನುಡಿಯ ಒಡಲು -09 | ನುಡಿ ಮತ್ತು ಮೆದುಳು', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2020/08/brain_language_suddidina.jpg&description=ನುಡಿಯ ಒಡಲು -09 | ನುಡಿ ಮತ್ತು ಮೆದುಳು', 'pinterestShare', 'width=750,height=350'); return false;" title="Pin This Post">
- ಡಾ. ಮೇಟಿ ಮಲ್ಲಿಕಾರ್ಜುನ, ಸಹ ಪ್ರಾಧ್ಯಾಪಕರು,ಭಾಷಾಶಾಸ್ತ್ರ ವಿಭಾಗ, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ನುಡಿ ಮತ್ತು ಮೆದುಳುಗಳ ನಡುವಣ ನಂಟಸ್ತಿಕೆ ಎಂತಹದು? ನುಡಿಗೂ ಹಾಗೂ ಮೆದುಳಿಗೂ ನೇರವಾದ ನಂಟಸ್ತಿಕೆ ಇರುವುದರಿಂದ, ಈ ಎರಡೂ ಸಂಗತಿಗಳನ್ನು ಇಲ್ಲಿ ಚರ್ಚಿಸುವ ಅಗತ್ಯವಿದೆ. ಮೆದುಳು ಹಾಗೂ ನುಡಿಯ ನಡುವಣ ನಂಟಸ್ತಿಕೆ ಎಂತಹದು? ಯಾವ ಬಗೆಯಲ್ಲಿ ಮೆದುಳು ನುಡಿಯೊಂದಿಗೆ ನಂಟಸ್ತಿಕೆಉನ್ನು ಬೆಳೆಸಿಕೊಂಡಿರುತ್ತದೆ? ಹಾಗೂ ಈಗಾಗಲೇ ಈ ಹಿಂದೆ ಚರ್ಚಿಸಿದಂತೆ, ನುಡಿ ಮಾನವರಿಗೆ ಒದಗಿರುವ ಒಂದು ಅಂತಸ್ಥ ಸಾಮರ್ಥ್ಯ.
ಈ ಸಾಮರ್ಥ್ಯ ಅವರ ಮೆದುಳಿನಲ್ಲಿ ಯಾವ ಜಾಗದಲ್ಲಿ ಅಂತರ್ಗತವಾಗಿರುತ್ತದೆ. ಮಾನವರ ಮೆದುಳಿನ ರಚನೆಯ ಮೂಲಸ್ವರೂಪವನ್ನು ಅರಿಯುವುದರ ಜೊತೆಗೆ ನುಡಿಯ ಬಗೆಗಿನ ಕೆಲವು ಕುತೂಹಲಕಾರಿ ಸಂಗತಿಗಳನ್ನು ತಿಳಿಯಬಹುದು. ಮಾನವರಲ್ಲಿ ಜನ್ಮಜಾತವಾಗಿ ನುಡಿಯನ್ನು ಗಳಿಸಿಕೊಳ್ಳುವ ಅಂತಸ್ಥ ಸಾಮರ್ಥ್ಯ ಅವರ ಮೆದುಳಿನಲ್ಲಿ ಅಂತರ್ಗತವಾಗಿರುತ್ತದೆ. ಚಾಮ್ಸ್ಕಿಯ ಈ ನಿಲುವನ್ನು ಎರಿಕ್ ಲೆನ್ಬರ್ಗ್ ಒಪ್ಪಿಕೊಳ್ಳುತ್ತಾನೆ ದಿಟ.
ಆದರೆ ನುಡಿ ಗಳಿಕೆಯ ಪ್ರಕ್ರಿಯೆಯ ಬಗೆಗೆ ಕೆಲವು ಮಹತ್ವದ ಹೊಳವುಗಳನ್ನು ಅವನು ಕೊಡುತ್ತಾನೆ. ನುಡಿ ಗಳಿಕೆಗೆ ಒಂದು ನಿಶ್ಚಿತ ಗಡುವು (ಕ್ರಿಟಿಕಲ್ ಪಿರಿಯೇಡ್) ಇರುತ್ತದೆ. ಆ ನಿಗದಿತ ಗಡುವಿನೊಳಗೆ ಪ್ರತಿ ಮಗು ತನಗೆ ಸಿಗುವ ನುಡಿಯ ಹೂಡುವಳಿಗಳ (ಇನ್ಪುಟ್ಸ್) ಮೂಲಕ, ತನ್ನಲ್ಲಿರುವ ಅಂತಸ್ಥ ಸಾಮರ್ಥ್ಯವನ್ನು ಬಳಸಿಕೊಂಡು ನುಡಿಯನ್ನು ಗಳಸಿಕೊಳ್ಳದೇ ಹೋದರೆ, ಆ ಮಗುವಿಗೆ ಮುಂದೆಂದೂ ನುಡಿಯನ್ನು ಕಲಿಯಲು/ಪಡೆದುಕೊಳ್ಳಲು ಸಾಧ್ಯವಾಗುವುದಿಲ್ಲ.
ಲೆನ್ಬರ್ಗ್ ತನ್ನ ಈ ಚಿಂತನೆಯನ್ನು ವಿವರಿಸುವುದಕ್ಕೆ ಪ್ರೌಢಿಮೆ (ಮ್ಯಾಚ್ಯುರೇಶನ್) ಎಂಬ ಒಂದು ಅರಿಮೆ ಪದವನ್ನು ಹುಟ್ಟುಹಾಕುತ್ತಾನೆ. ಈ ಪ್ರೌಢಿಮೆಯ ಅವಧಿ ಹದಿನೆಂಟು ತಿಂಗಳಿಂದ ಹನ್ನೆರಡು ಇಲ್ಲವೇ ಹದಿನಾಲ್ಕು (ಪಬರ್ಟಿಯ ಕಾಲದವರಗೆ) ವರುಷಗಳವರೆಗೆ ಗುರುತಿಸುತ್ತಾನೆ. ಈ ಪ್ರೌಢಿಮೆ ಪ್ರಕ್ರಿಯೆಯಲ್ಲಿಯೇ ನುಡಿಗಳಿಕೆಯ ನೆಲೆಗಳು ಅಡಕಗೊಂಡಿರುತ್ತವೆ. ಇವನ ಈ ತರ್ಕಕ್ಕೆ ಮುಖ್ಯ ಕಾರಣವೇ ಮಗ್ಗಲಾಗುವಿಕೆ (ಲ್ಯಾಟರಲೈಜೇಶನ್). ಈ ಅರಿಮೆಯ ಪದದ ಕಣ್ನೋಟದಿಂದ ನುಡಿ ಗಳಿಕೆಯ ನೆಲೆಗಳನ್ನು ಇನ್ನಷ್ಟು ವಿವರವಾಗಿ ನೋಡಬಹುದು.
ಪ್ರತಿಯೊಂದು ಸಾಮನ್ಯ ಮಗು ಕೂಡ ಈ ಮಗ್ಗಲಾಗುವಿಕೆಯ ಪ್ರಕ್ರಿಯೆಯಲ್ಲಿಯೆ ತನ್ನ ಎಲ್ಲ ಗ್ರಹಿಕಾ ಸಾಮರ್ಥ್ಯಗಳನ್ನು ಮೆದುಳಿನ ಬೇರೆ ಬೇರೆ ಭಾಗಗಳಲ್ಲಿ ನೆಲೆಗೊಳಿಸುವಲ್ಲಿ ನಿರತವಾಗಿರುತ್ತದೆ. ನುಡಿ ಗಳಿಕೆಯ ಪ್ರಕ್ರಿಯೆಯೂ ಈ ಮಗ್ಗಲಾಗುವಿಕೆಯ ಭಾಗವೇ ಆಗಿರುತ್ತದೆ. ಮಕ್ಕಳು ತಮ್ಮ ಮೆದುಳಿನ ನಿಶ್ಚಿತ ಭಾಗಗಳಲ್ಲಿ, ಈ ಮಗ್ಗಲಾಗುವಿಕೆಯ ಕಾಲದಲ್ಲಿಯೇ, ತಮ್ಮಲ್ಲಿರುವ ಅಂತಸ್ಥ ಸಾಮರ್ಥ್ಯದ ಮೂಲಕ ನುಡಿಯ ಬಹುತೇಕ ನೆಲೆಗಳನ್ನು ಪಡೆದುಕೊಳ್ಳುತ್ತಾರೆ. ಆದರೆ ಈ ಪ್ರಕ್ರಿಯೆ ಮಕ್ಕಳಿಗೆ ಸಿಗುವ ನುಡಿಯ ಹೂಡುವಳಿ (ಇನ್ಪುಟ್ಸ್) ಗಳನ್ನೂ ನಂಬಿಕೊಂಡಿರುತ್ತದೆ ಎಂಬುದನ್ನೂ ಗಮನಿಸಬೇಕಾಗುತ್ತದೆ.
ಒಂದು ಸಲ ಈ ಮಗ್ಗಲಾಗುವಿಕೆಯ ಕೆಲಸ ಮುಗಿದ ಮೇಲೆ ನುಡಿಯನ್ನು ಗಳಿಸಿಕೊಳ್ಳುವ ಕಸುವು ಸ್ಥಗಿತವಾಗುತ್ತದೆ. ಆದರೆ ಎಂದಿನಂತೆ, ಈ ಮಗ್ಗಲಾಗುವಿಕೆ ಮಗುವಿಗೆ ಆಯಾ ನುಡಿಯ ಸೊಲ್ಲರಿಮೆಯ/ವ್ಯಾಕರಣ ತಿಳಿವನ್ನು ಗಳಿಸಿಕೊಳ್ಳಲು ಅಗತ್ಯಕ್ಕಿಂತ ಹೆಚ್ಚು ಅವಕಾಶವನ್ನು ಕೊಡುತ್ತದೆ. ಹೆಚ್ಚಿನ ಮಂದಿಗೆ ಈ ನುಡಿ ಗಳಿಕೆಯ ನೆಲೆ ಅವರ ಎಡಮೆದುಳಿನಲ್ಲಿಯೇ ಕೊನೆಗೊಳ್ಳುತ್ತದೆ.
ನಿರ್ಣಾಯಕ ಕಾಲ (ಕ್ರಿಟಿಕಲ್ ಪಿರಿಯೆಡ್) ಮೀರಿದ ಮೇಲೆ, ನುಡಿ ಬೆಳವಣಿಗೆ/ಗಳಿಕೆಯ ಸಹಜ ಸ್ಥಿತಿ ನಿಂತ ಮೇಲೆ, ಒಂದುವೇಳೆ ಎಡಮೆದುಳಿಗೆ ಏನಾದರೂ ಎರವು [ಡ್ಯಾಮೇಜ್] ಉಂಟಾದರೆ, ಅಂತಹ ಎರವು ಖಾಯಂ ಆಗಿಯೇ ಉಳಿಯುತ್ತದೆ. ಕೇವಲ ಕಿರಿಯ ವಯಸ್ಸಿನ ಮಕ್ಕಳು ಮಾತ್ರ ತಮ್ಮ ಬಲಮೆದುಳನ್ನು ಬಳಸಿಕೊಂಡು ನುಡಿಯನ್ನು ಗಳಸಿಕೊಳ್ಳುವ ಸಾಮರ್ಥ್ಯವನ್ನು ತೋರಿಸುತ್ತಾರೆ.
ಆದರೆ ಈ ನಿರ್ಣಾಯಕ ಕಾಲದಲ್ಲಿ ಸಾಮನ್ಯ ಮಗು ಅತ್ಯಂತ ಸುಲಭವಾಗಿ ನುಡಿಯನ್ನು ಗಳಿಸಿಕೊಳ್ಳುತ್ತದೆ ಎಂಬುದು ಮಾತ್ರ ದಿಟ. ಈ ನಿರ್ಣಾಯಕ ಕಾಲ ಎಂಬ ನೆಲೆಯೂ ಜೈವಿಕವಾಗಿ ನಿರ್ಧರಿಸಲ್ಪಟ್ಟಿರುತ್ತದೆ. ಹಾಗಾಗಿ ನುಡಿ ಗಳಿಕೆಗೆ ಯಾವ ಕಾಲ ಸುಳುವಾಗಿರುತ್ತೆ ಮತ್ತು ಯಾವುದು ಕಷ್ಟಕರವಾಗಿರುತ್ತೆ ಎಂಬ ಸಂಗತಿಗಳೂ ಮೊದಲೇ ನಿರ್ಧಾರವಾಗಿರುತ್ತವೆ.
ಲೆನ್ಬರ್ಗ್ನ ಪ್ರಕಾರ ನುಡಿ ಗಳಿಕೆಯ ಪ್ರಕ್ರಿಯೆ ಅಂಬೆಗಾಲಿಡುವ ಮಗುವಿಂದ ಶುರುವಾಗಿ ಹದಿಹರೆಯದಲ್ಲಿ ಕೊನೆಗೊಳ್ಳುತ್ತದೆ. ಮತ್ತು ಇದರ ಜೊತೆಗೇನೆ ಮಗ್ಗಲಾಗುವಿಕೆ ಪ್ರಕ್ರಿಯೆಯೂ ಕೊನೆಗೊಳ್ಳುತ್ತದೆ. ಈ ವೇಳೆಯಲ್ಲಿ ಯಾವುದೇ ಔಪಚಾರಿಕ ತರಬೇತಿಯಿಲ್ಲದೇ ಮಗು ತನ್ನ ತಾಯ್ನುಡಿ ಇಲ್ಲವೇ ಮೊದಲ ನುಡಿಯನ್ನು ಅತ್ಯಂತ ಸುಳುವಾಗಿ ಕಲಿಯಬಲ್ಲದು. ಹದಿಹರಯ ಇಲ್ಲವೇ ಪಬರ್ಟಿಯ ನಂತರ ನುಡಿ ಗಳಿಕೆಯ ಕಸುವು ತನ್ನಷ್ಟಕ್ಕೆ ಸ್ಥಗಿತಗೊಳ್ಳುತ್ತದೆ.
ಎಡಮೆದುಳು ಮತ್ತು ಬಲಮೆದುಳು
ಮೆದುಳು ಮೋಟರ್, ಸೆನ್ಸರಿ ಚಟುವಟಿಕೆ ಹಾಗೂ ಚಿಂತನೆಯ ಪ್ರಕ್ರಿಯೆಯನ್ನು ನಿಯಂತ್ರಿಸುತ್ತದೆ. ಬೌದ್ಧಿಕ (ಸೆರೆಬ್ರಲ್) ಮೆದುಳನ್ನು ಎಡ ಮತ್ತು ಬಲ ಎಂದು ಎರಡು ಭಾಗಗಳನ್ನಾಗಿ ವಿಂಗಡಿಸಲಾಗುತ್ತದೆ. ಈ ಎರಡೂ ಭಾಗಗಳು ಕೆಲವು ವಿಶೇಷ ರಚನೆ ಹಾಗೂ ಕ್ರಿಯೆಗಳನ್ನು ನೆರವೇರಿಸುವಂತೆ ಕಾಣುತ್ತವೆ. ಇವುಗಳಲ್ಲಿ ಕೆಲವಷ್ಟು ಕ್ರಿಯೆಗಳು ಎಡಮೆದುಳಿನಲ್ಲಿ ಉಂಟಾದರೆ, ಮತ್ತೆ ಕಲವು ಕ್ರಿಯೆಗಳು ಬಲಮೆದುಳಿನಲ್ಲಿ ಉಂಟಾಗುತ್ತವೆ. ಲೆನ್ಬರ್ಗ್ನ ಪ್ರಕಾರ ಮೆದುಳು ಹೀಗೆ ಇಬ್ಭಾಗವಾಗುವ ಬಗೆಯನ್ನು ಮಗ್ಗಲಾಗುವಿಕೆ (ಲ್ಯಾಟರಲೈಜೇಶನ್) ಎಂದು ಕರೆಯಲಾಗುತ್ತದೆ.
ಇವುಗಳು ಒಂದಕ್ಕೊಂದು ಕನ್ನಡಿ ಬಿಂಬದಂತೆ ಕೆಲಸ ಮಾಡುತ್ತವೆ. ಎಡಮೆದುಳು ದೇಹದ ಬಲಗಡೆಯನ್ನು ನಿಯಂತ್ರಿಸಿದರೆ, ಬಲಮೆದುಳು ದೇಹದ ಎಡಗಡೆಯನ್ನು ನಿಯಂತ್ರಿಸುತ್ತದೆ. ಮತ್ತಿತರ ತಜ್ಞ ಕ್ರಿಯೆಗಳನ್ನು ಮೆದುಳಿನ ಎರಡೂ ಭಾಗಗಳು ನಿಭಾಯಿಸುತ್ತವೆ. ಈ ನಿಟ್ಟಿನಲ್ಲಿ ಸಾಕಷ್ಟು ಸಂಶೋಧನೆಗಳು ನಡೆದಿವೆಯಾದರೂ, ಈ ನಿಲುವುಗಳನ್ನು ಸಮರ್ಥಿಸುವಷ್ಟು ಆಧಾರಗಳು ಇನ್ನೂ ಸಿಕ್ಕಿಲ್ಲ. ಆದರೆ ಈ ಎರಡೂ ಭಾಗಗಳಲ್ಲಿ ಎಡಮೆದುಳಿನ ಭಾಗವೇ ಹೆಚ್ಚು ಪ್ರಾಬಲ್ಯವನ್ನು ಹೊಂದಿದೆ.
ನುಡಿ ಸಂಬಂಧಿ ಚಟುವಟಿಕೆಗಳಿಗೆ ಈ ಭಾಗವೇ ಹೊಣೆಯಾಗಿರುವ ಕಾರಣ ಸಹಜವಾಗಿಯೇ ಎಡಮೆದುಳಿನ ಭಾಗ ಪ್ರಾಬಲ್ಯವನ್ನು ಹೊಂದಿದೆ. ಏಕೆಂದರೆ, ನುಡಿಗೆ ಸಂಬಂಧಿಸಿದ ಬ್ರೊಕಾ ಮತ್ತು ವರ್ನಿಕ್ ಏರಿಯಾಗಳು, ಆರ್ಕ್ಯುವೇಟ್ ಫ್ಯಾಸಿಕುಲಸ್, ಆಂಗ್ಯುಲರ್ ಗಯ್ರಸ್ ಈ ಎಲ್ಲ ಜಾಗಗಳೂ ಎಡಮೆದುಳಿನಲ್ಲಿ ನೆಲೆನಿಂತುರಿವುದು ಕೂಡ ಇಂತಹ ಪ್ರಾಬಲ್ಯಕ್ಕೆ ಒತ್ತಾಸೆಯಾಗಿರಬಹುದು.
ಅಫೇಶಿಯಾ (ಮಾತಿನ ಕಸುವನ್ನು ಕಳೆದುಕೊಳ್ಳುವ ಬಗೆ. ಇದು ಬೇರೆ ಬೇರೆ ನೆಲೆಗಳಲ್ಲಿ ಇಲ್ಲವೇ ಸ್ವರೂಪಗಳಲ್ಲಿ ಉಂಟಾಗುತ್ತದೆ. ಇದು ಕೂಡ ಒಂದು ಕಾಯಿಲೆ?) ಬಗೆಗಿನ ಅಧ್ಯಯನಗಳು ಹೇಳುವಂತೆ ನುಡಿ ಕುರಿತ ಚಟುವಟಿಕೆಗಳು ಮೊದಲಾಗುವುದೇ ಎಡಮೆದುಳಿನಲ್ಲಿ. ಮೆದುಳಿನಲ್ಲಿ ಮಗ್ಗಲಾಗುವಿಕೆ ಕೆಲಸ ನಡೆಯುತ್ತದೆ ಎಂಬ ಸಂಗತಿಯನ್ನು ತಿಳಿಯಲು ಕೂಡ ಈ ಅಧ್ಯಯನಗಳೇ ಆಧಾರವಾಗಿವೆ. ಸ್ಟೇನ್ಬರ್ಗ್ನ ಪ್ರಕಾರ ಸೀಳು ಮೆದುಳಿನ (ಸ್ಪ್ಲಿಟ್ಬ್ರೇನ್) ರೋಗಿಗಳು, ಮೆದುಳು ಮಗ್ಗಲಾಗುವಿಕೆಗೆ ಬೇಕಾಗುವ ಇನ್ನೂ ಹೆಚ್ಚಿನ ಆಧಾರಗಳನ್ನು ಒದಗಿಸುತ್ತಾರೆ.
ಆದರೆ ಈ ಸೀಳು ಮೆದುಳಿನ ರೋಗಿಗಳಲ್ಲಿ ಎಡ ಮತ್ತು ಬಲ ಎರಡೂ ಮೆದುಳುಗಳು ಪ್ರತ್ಯೇಕವಾಗಿ ಕೆಲಸ ಮಾಡುತ್ತವೆ. ಆರೋಗ್ಯವಂತರ ಮೆದುಳಿನಂತೆ ಇವು ಒಂದಕ್ಕೊಂದು ಪೂರಕವಾಗಿ ಕೆಲಸ ಮಾಡುವುದಿಲ್ಲ. ಹಾಗೂ ಇವುಗಳ ನಡುವೆ ಯಾವ ಬಗೆಯ ಹೊಂದಾಣಿಕೆಯೂ ಇರುವುದಿಲ್ಲ. ಅಂದರೆ ಒಂದು ಮೆದುಳಿನಲ್ಲಿ ಇರುವ ಮಾಹಿತಿ ಮತ್ತೊಂದಕ್ಕೆ ರವಾನೆಯಾಗುವುದಿಲ್ಲ. ಆದರೆ ಆರೋಗ್ಯವಂತರ ಮೆದುಳಿನ ಈ ಎರಡೂ ಭಾಗಗಳು ಎಷ್ಟೊಂದು ವಿಷಯಗಳಲ್ಲಿ ಒಂದಕ್ಕೊಂದು ನೆರವಾಗುತ್ತವೆ ಎನ್ನುವುದು ವಿಶೇಷ.
ಮೆದುಳಿನ ಯಾವ ಜಾಗದಲ್ಲಿ ಏನಿರುತ್ತದೆ?
ನುಡಿ, ತರ್ಕ, ವಿಶ್ಲೇಷಣಾತ್ಮಕ ಚಟುವಟಿಕೆ, ಗಣಿತಶಾಸ್ತ್ರದಲ್ಲಿ ವಿಶೇಷ ತಜ್ಞತೆ ಇವುಗಳನ್ನೆಲ್ಲ ಒಳಗೊಂಡಿರುವ ಜಾಗವೇ ಎಡಮೆದುಳು. ಹಲವಾರು ಅಧ್ಯಯನಗಳ ಮೂಲಕ ಈ ಸಂಗತಿ ಸಾಬೀತಾಗಿದೆ. ಬ್ರೊಕಾ ಮತ್ತು ವರ್ನಿಕ್ ಏರಿಯಾಗಳು, ಆರ್ಕ್ಯುವೇಟ್ ಫ್ಯಾಸಿಕುಲಸ್, ಆಂಗ್ಯುಲರ್ ಗಯ್ರಸ್ ಈ ಎಲ್ಲ ಜಾಗಗಳು ನುಡಿಯ ತಿಳುವಳಿಕೆ ಮತ್ತು ಉತ್ಪಾದನೆಯನ್ನು ನಿಯಂತ್ರಿಸುವ ಜಾಗಗಳೇ ಆಗಿವೆ ಎಂಬುದು ಗಮನಾರ್ಹ.
ಭಾವನೆಗಳನ್ನು ಹುಟ್ಟಿಸುವ ಹಾಗೂ ಅವುಗಳನ್ನು ಗುರುತಿಸುವ ನೆಲೆಗಳು, ಮುಖ ಚಹರೆಗಳನ್ನು ಗುರುತಿಸುವ, ವಸ್ತುಗಳ ರಾಚನಿಕ ಸ್ವರೂಪವನ್ನು ಸಾರ್ವತ್ರಿಕವಾಗಿ ಗ್ರಹಿಸುವ ನೆಲೆಗಳನ್ನು ಬಲಮೆದುಳೇ ಒಳಗೊಂಡಿರುತ್ತದೆ. ಮತ್ತು ಸಂಗೀತ, ಅತ್ಯಂತ ತೊಡಕಿನ ಕಣ್ನೋಟದ ಬಗೆಗಳು ಕೂಡ ಬಲಮೆದುಳಿನಲ್ಲಯೇ ಕ್ರಿಯಾಶೀಲವಾಗಿರುತ್ತವೆ. ನುಡಿಗೆ ಹೊರತಾದ ಉಲಿಗಳು ಅಂದರೆ, ಸಪ್ಪಳ ಹಾಗೂ ಪ್ರಾಣಿಗಳ ಕೂಗಾಟದ ಉಲಿಗಳನ್ನೂ ಬಲಮೆದುಳು ಒಳಗೊಂಡಿರುತ್ತದೆ. ಎಡಮೆದುಳನ್ನು ಯಾವುದೇ ಅಪಾಯ ಇಲ್ಲವೇ ಕಾಯಿಲೆಯ ಕಾರಣ ತೆಗೆದು ಹಾಕಿದರೆ, ನುಡಿಗೆ ಸಂಬಂಧಿಸಿದ ಕೆಲಸವನ್ನು ಇದು ವಹಿಸಿಕೊಳ್ಳುತ್ತದೆ.
ಪೌಲ್ ಬ್ರೋಕಾ ಮತ್ತು ಕರ್ಲ್ ವರ್ನಿಕ್
ಯಾರಿವರು? ಪೌಲ್ ಬ್ರೋಕಾ ಇವನೊಬ್ಬ ಫ್ರೆಂಚ್ ಸರ್ಜನ್/ನರತಜ್ಞ (ನ್ಯೂರೋಅನಾಟಮಿಸ್ಟ್). ಇವನು ಯುದ್ಧದ ಗಾಯಾಳುಗಳ ಜೀವವನ್ನು ಉಳಿಸುವ ಕೆಲಸದಲ್ಲಿ ತೊಡಗಿಕೊಂಡಿದ್ದನು. ಈ ಗಾಯಾಳುಗಳಿಗೆ ಚಿಕಿತ್ಸಿಸುವಾಗ ಅವನು ತೀರಾ ನಿಗಾವಹಿಸಿ ಎಲ್ಲರನ್ನು ಗಮನಿಸುತ್ತಿದ್ದನು. ಹಾಗೂ ಆ ಎಲ್ಲ ಗಾಯಾಳುಗಳನ್ನು ತುಂಬಾ ಕಾಳಜಿಯಿಂದಲೂ ನೋಡಿಕೊಳ್ಳುತ್ತಿದ್ದನು. ಅಸಾಧಾರಣವಾದದ್ದನ್ನು ಕಂಡುಹಿಡಿಯಲು ಕಾರಣವೇ ಅವನ ಈ ಬದ್ಧತೆ ಎಂದು ಹೇಳಬಹುದು.
ಇವನ ಚಿಕಿತ್ಸೆಯಿಂದ ಚೇತರಿಸಿಕೊಂಡ ಒಂದಿಷ್ಟು ಗಾಯಾಳುಗಳು ಎಲ್ಲ ರೀತಿಯಿಂದಲೂ ಸಹಜವಾಗಿಯೇ ಕಾಣುತ್ತಿದ್ದರು. ಆದರೆ ಇವರೆಲ್ಲರೂ ಮಾತಿನ ಕೊರತೆಯಿಂದ ಬಳಲುತ್ತಿದ್ದರು. ಈ ರೋಗಿಗಳ ಎಡಮೆದುಳಿನ ಸೀಮಿತ ಜಾಗದಲ್ಲಿ ಗಾಯವಾಗಿರುವುದೇ ಕಾರಣವಾಗಿರುತ್ತಿತ್ತು. ಮೆದುಳಿನಲ್ಲಿಯ ಈ ಜಾಗವನ್ನು ಇವನು ತನ್ನ ಸಂಶೋಧನೆಯಲ್ಲಿ ಕಂಡುಹಿಡಿದನು. ಇದನ್ನೇ ಬ್ರೋಕಾ ಏರಿಯಾ ಎಂದು ಕರೆಯಲಾಗುತ್ತದೆ.
ಮೆದುಳಿನ ಈ ಜಾಗಕ್ಕೆ ಯಾವುದೇ ಗಾಯ ಇಲ್ಲವೇ ಹೊಡೆತದ ಪರಿಣಾಮದಿಂದ ಮಾತಿನ ಕೊರತೆ ಉಂಟಾದರೆ, ಆ ಜಾಗವನ್ನು ಬ್ರೋಕಾ ಅಫೇಸಿಯಾ ಎಂದು ಗುರುತಿಸಲಾಗಿದೆ. ಅಫೇಸಿಯಾ ಎಂಬುದು ಗ್ರೀಕ್ ಪದ, ಮಾತಿನ ಕಸುವನ್ನು (ಸ್ಪೀಚ್ಲೆಸ್) ಕಳೆದುಕೊಂಡ ನೆಲೆಯನ್ನು ಇದು ಸೂಚಿಸುತ್ತದೆ. ಸಾವಿರದ ಎಂಟನೂರು ಎಂಬತ್ತೊಂದರಲ್ಲಿ ಮಾತಿನ ಬೇನೆಗೆ (ಅಫೇಸಿಯಾ) ಒಳಗಾಗಿದ್ದ ಒಬ್ಬ ವ್ಯಕ್ತಿಗೆ ಬ್ರೋಕಾ ಚಿಕಿತ್ಸೆಯ (ಸಲಹೆಗಳ)ನ್ನು ನೀಡುತ್ತಿದ್ದನು. ಆ ವ್ಯಕ್ತಿಯನ್ನು ಬ್ರೋಕಾ ‘ತಾನ್’ ಎಂದು ಕರೆದನು.
ಈ ತಾನ್ ತೀರಿಕೊಂಡ ಮೇಲೆ ಬ್ರೋಕಾ ಅವನ ಶವಪರೀಕ್ಷೆ ಮಾಡುತ್ತಾನೆ. ಆವಾಗ ಆ ವ್ಯಕ್ತಿಯ ಎಡಮೆದುಳಿನ ಒಂದು ಜಾಗದಲ್ಲಿ ಗಾಯವಿರುವುದು ಕಂಡುಬರುತ್ತದೆ. ಎಡ ಕಿವಿಯ ಹಾಲೆಯ ಮುಂಭಾಗದ (ಫ್ರಂಟಲ್ ಲೋಬ್) ಮೇಲಿನ ಜಾಗವೇ ಈ ಗಾಯವಿರುವ ಜಾಗವಾಗಿತ್ತು. ಅಂದರೆ ಎಡಮೆದುಳು ನೆಲೆಗೊಂಡಿರುವ ಜಾಗವೆಂದೇ ಹೇಳಬೇಕು.
ಈ ಜಾಗದಲ್ಲಿ ಉಂಟಾಗಿರುವ ಗಾಯವನ್ನು ಬ್ರೋಕಾ ಗುರುತಿಸಿದ್ದಕ್ಕಾಗಿ ಆ ಜಾಗವನ್ನೇ ಬ್ರೋಕಾ (ಜಾಗ) ಏರಿಯಾ ಎಂದು ಕರೆಯುತ್ತಾರೆ. ‘ನುಡಿಯ ಸಾಮರ್ಥ್ಯ ಮಾನವರ ದೇಹದ ಯಾವ ಭಾಗದಲ್ಲಿ ನೆಲೆಗೊಂಡಿರುತ್ತೆ?’ ಮೆದುಳಿನಲ್ಲಿಯೋ? ಇಲ್ಲವೇ ಮನಸ್ಸಿನಲ್ಲೋ? ಎಂಬ ಆವತ್ತಿನ ಕಾಲದ ನುಡಿ ಬಗೆಗಿನ ಚರ್ಚೆಗೆ ಬ್ರೋಕಾನ ಈ ನಿಲುವು, ನುಡಿ ಮೆದುಳಿನಲ್ಲಿಯೇ ನೆಲೆ ನಿಂತಿರುತ್ತದೆ ಎಂಬುದಕ್ಕೆ ಇದೊಂದು ಸಮರ್ಥನೆಯೂ ಆಗಿದೆ ಎಂಬುದನ್ನು ಮನಗಾಣುವುದಕ್ಕೆ ಈ ಸಂಗತಿಯು ಒತ್ತಾಸೆಯಾಗಿದೆ.
ಬ್ರೋಕಾ ಜಾಗದಲ್ಲಿ ಉಂಟಾಗುವ ಬೇನೆಯಿಂದ ಬಳಲುವ ವ್ಯಕ್ತಿ, ನುಡಿಗೆ ಸಂಬಂಧಿಸಿದ ಯಾವ ಬಗೆಯ ತೊಡಕುಗಳನ್ನು ಎದುರಿಸುತ್ತಾನೆ ಎಂಬುದನ್ನು ಬ್ರೋಕಾ ಕಂಡುಹಿಡಿದನು. ನುಡಿಗೆ ಸಂಬಂಧಿಸಿದ ಆ ತೊಂದರೆ ಯಾವುದೆಂದರೆ, ಮಾತನ್ನು ಹೊರಡಿಸುವುದೇ ಆಗಿರುತ್ತದೆ. ಏಕೆಂದರೆ, ಮಾತನ್ನು ಹೊರಡಿಸುವ ಜಾಗವಿರುವುದೇ ಬ್ರೋಕಾ ಏರಿಯಾ. ಇಂತವರಿಗೆ ಸರಾಗವಾಗಿ ಮಾತನಾಡಲು ಸಾಧ್ಯವಾಗುವುದಿಲ್ಲ. ಈ ನೆಲೆಯ ವ್ಯಕ್ತಿಗಳು ಬಹುತೇಕ ಸನ್ನಿವೇಶದಲ್ಲಿ ಮಾತನಾಡುವ ಕಸುವನ್ನೇ ಕಳೆದುಕೊಳ್ಳುತ್ತಾರೆ. ಇದನ್ನು ವರ್ಬಲ್ ಅಪ್ರಾಕ್ಸಿಯಾ [ಮಾತನಾಡದ ನೆಲೆ] ಎಂದು ಕರೆಯುತ್ತಾರೆ.
ಆದರೆ ಬೇರೆಯವರು ಮಾತಾಡುವುದನ್ನು ಇವರು ಅರ್ಥ ಮಾಡಿಕೊಳ್ಳುತ್ತಾರೆ. ಹಾಗೂ ವರ್ಬಲ್ ಅಪ್ರಾಕ್ಸಿಯಾದಿಂದ ಬಳಲುವ ಈ ವ್ಯಕ್ತಿಗಳಿಗೆ ಉಚ್ಚಾರಣೆಯಲ್ಲಿ ತೊಂದರೆಯಾಗುತ್ತದೆ. ಅಂದರೆ ಇವರಿಗೆ ಗಂಟಲು, ಉಲಿಪೆಟ್ಟಿಗೆ, ತುಟಿ, ದವಡೆ ಇವುಗಳ ಮೂಲಕ ಉಚ್ಚರಿಸುವಲ್ಲಿ ಕಷ್ಟವಾಗುತ್ತದೆ. ಸರಿಯಾಗಿ ಪದಗಳನ್ನು ಜೋಡಿಸಿ ಉಚ್ಚರಿಸಲು ಸಾಧ್ಯವಾಗುವುದಿಲ್ಲ. ಮುಖ್ಯವಾಗಿ ಇನ್ನೊಬ್ಬರಿಗೆ ಪ್ರತಿಕ್ರಿಯಿಸುವಾಗ, ಸ್ವಂಪ್ರೇರಿತವಾಗಿ ಏನನ್ನಾದರೂ ಉಚ್ಚರಿಸಬೇಕೆಂದರೆ ಇವರು ತಡಕಾಡುತ್ತಾರೆ.
ಪ್ರತಿಸಲವೂ ಅವರ ಹೊರಡಿಸುವ ಉಲಿಗಳ ವಿಧಾನವೇ ಬೇರೆ ಬೇರೆಯಾಗಿರುತ್ತದೆ. ಇನ್ನೊಬ್ಬರು ಉಚ್ಚರಿಸುವುದನ್ನು ನೋಡಿ ಇವರು ಅನುಕರಿಸಬಹುದಾದರೂ, ಅದು ಯಾವಾಗಲೂ ನಡೆಯುವ ಕೆಲಸವಲ್ಲ. ಇವರಿಗೆ ಗ್ರಹಿಕೆಯಲ್ಲಿ ಸುಮಾರು 50% ರಿಂದ 90% ರಷ್ಟು ನಿಖರತೆ ಇರುತ್ತದೆ. ಆದರೆ ಇದೇ ನಿಖರತೆಯನ್ನು ಪರಸ್ಪರ ಮಾತುಕತೆಗಳಲ್ಲಿ ಎದರು ನೋಡಲು ಸಾಧ್ಯವಿಲ್ಲ. ಇಂತಹ ಸನ್ನಿವೇಶದಲ್ಲಿ ಇವರ ಗ್ರಹಿಕೆಯ ಕಸುವು ಸುಮಾರು 50% ಕ್ಕಿಂತ ಕಡಿಮೆಯಾಗಬಹುದು.
ಹಾಗೂ ಇವರು ಕೇವಲ ನಾಮಪದಗಳನ್ನು ಮಾತ್ರ ಹೊರಡಿಸಬಲ್ಲರು, ಬೇರೆ ಬಗೆಯ ಪದಗಳನ್ನು ಹೊರಡಿಸಲು ಇವರಿಗೆ ಸಾಧ್ಯವಾಗುವುದಿಲ್ಲ. ನಾಮಪದಗಳೊಂದಿಗೆ ಬರುವ ಒಟ್ಟು (ಪ್ರತ್ಯಯ)ಗಳನ್ನೂ ಇವರು ಹೊರಡಿಸಲಾರರು. ಹಾಗೂ ಸೊಲ್ಲರಿಮೆ/ವ್ಯಾಕರಣದ ಅಪೂರ್ಣತೆ (ಅಗ್ರಾöಮ್ಯಾಟಿಕ್) ಮತ್ತು ಟೆಲಿಗ್ರಾಫಿಕ್ ಮಾದರಿಯ ಮಾತುಗಳನ್ನು ಮಾತ್ರ ಆಡುತ್ತಾರೆ. (ಉದಾ.ಗೆಗಾಗಿ, ನಾನು ಮನೆಗೆ ಹೋಗಿ ಊಟ ಮಾಡಿಕೊಂಡು ಬರುತ್ತೇನೆ) ಎಂಬುದನ್ನು ನಾ….ಮನೆ…..ಊಟ…. ಮುಂತಾಗಿ ಹೇಳಬಹುದು. ಬರವಣಿಗೆ ಮತ್ತು ಓದುವ ಚಳಕಗಳನ್ನೂ ಈ ಅಪ್ರಾಕ್ಸಿಯಾ ಬಾಧಿಸುತ್ತದೆ.
ನುಡಿಯ ಉತ್ಪಾದಕತೆಯಲ್ಲಿ ಕೊರತೆಯನ್ನು ಅನುಭವಿಸುವುದೇ ಬ್ರೋಕಾ ಅಫೇಸಿಯಾ. ಈ ಕೊರತೆಗಳು ನುಡಿ ಉತ್ಪಾದಕತೆಯ ಬೇರೆ ಬೇರೆ ನೆಲೆಯಲ್ಲಿಯೂ ಎದುರಾಗುತ್ತವೆ. ಬ್ರೋಕಾ ಏರಿಯಾ ಕುರಿತ ಎಲ್ಲ ವಿವರಗಳನ್ನು ಇಲ್ಲಿ ಚರ್ಚಿಸುವುದು ಸಾಧ್ಯವಿಲ್ಲ. ಸದ್ಯಕ್ಕೆ ಆ ಎಲ್ಲ ವಿವರಗಳನ್ನು ಚರ್ಚಿಸುವ ಅಗತ್ಯವೂ ಇಲ್ಲಿ ಎದ್ದು ಕಾಣುವುದಿಲ್ಲ. ಹಾಗಾಗಿ ಈಗ ಇಲ್ಲಿ ನುಡಿ ನೆಲೆಗೊಳ್ಳುವ ಮೆದುಳಿನ ಇನ್ನೊಂದು ಪ್ರಮುಖ ಭಾಗವಾಗಿರುವ ವರ್ನಿಕ್ ಏರಿಯಾ ಕುರಿತು ಚರ್ಚಿಸೋಣ.
ಕಾರ್ಲ್ ವೆರ್ನಿಕೆ
ಕಾರ್ಲ್ ವೆರ್ನಿಕೆ ಜರ್ಮನಿಯ ನರತಜ್ಞ-ನುಡಿಯರಿಗ. ಇವನು ನುಡಿ ಮತ್ತು ಮೆದುಳಿನ ನಂಟಸ್ತಿಕೆಯನ್ನು ಕುರಿತು ಪೌಲ್ ಬ್ರೋಕಾ ನಂತರ ಚಿಂತಿಸಿದವರಲ್ಲಿ ಮತ್ತೊಬ್ಬ ಬಹುದೊಡ್ಡ ಚಿಂತಕ. ಇವನು ಬ್ರೋಕಾ ಏರಿಯಾ ಹಾಗೂ ಮಾತಿನ ಕೊರತೆಯನ್ನು ಕುರಿತು ತನ್ನ ಸಂಶೋಧನಾ ತೀರ್ಮಾನಗಳನ್ನು ಪುಸ್ತಕೆ ರೂಪದಲ್ಲಿ ಪ್ರಕಟಿಸಿದನು. ಇದರಿಂದ ಇವನು ಲೋಕದಾದ್ಯಂತ ಹೆಸರುವಾಸಿಯಾದನು.
ತನ್ನ ಈ ಸಂಶೋಧನೆಯನ್ನು ಮುಂದುವರಿಸುತ್ತಿರುವ ಸಂದರ್ಭದಲ್ಲಿಯೇ ವೆರ್ನಿಕೆ ಒಂದು ಮುಖ್ಯವಾದ ಸಂಗತಿಯನ್ನು ಕಂಡುಕೊಂಡನು. ಅದೇನೆಂದರೆ, ಕೇವಲ ಬ್ರೋಕಾ ಏರಿಯಾಗೆ ಒದಗುವ ತೊಂದರೆಯ ಪರಿಣಾಮದಿಂದ ಮಾತ್ರ ಎಲ್ಲ ಬಗೆಯ ನುಡಿ ಕೊರತೆಗಳು ಉಂಟಾಗುವುದಿಲ್ಲ, ಮೆದುಳಿನ ಮತ್ತೊಂದು ಜಾಗದಲ್ಲಿ ಆಗುವ ತೊಂದರೆಯಿಂದಲೂ, ಮಾನವರು ಮಾತಿನ ಕೊರತೆಯನ್ನು ಎದುರಿಸುತ್ತಾರೆ ಎಂಬ ಸಂಗತಿಯನ್ನು ಕಂಡುಹಿಡಿದನು.
ಹಾಗಾದರೆ ವೆರ್ನಿಕೆ ಕಂಡುಕೊಂಡ ನುಡಿ ಕುರಿತ ಕೊರತೆಗಳು ಎಂತಹವು? ಕಾರ್ಲ್ ವೆರ್ನಿಕೆ ಕಂಡುಹಿಡಿದ ಆ ಜಾಗವು ಬ್ರೋಕಾ ಏರಿಯಾಕ್ಕಿಂತ ಕೊಂಚ ಹಿಂದುಗಡೆ ಇರುತ್ತದೆ. ಅಂದರೆ ಆಡಿಟರಿ ಕರ್ಟೆಕ್ಸ್ಗೆ ಹೊಂದಿಕೊಂಡಿರುತ್ತದೆ. ಇದನ್ನು ಮೆದುಳಿನ ಎಡ ಹಿಂಭಾಗವೆಂದು (ಟೆಂಪರಾಲ್ ಲೋಬ್) ಹೇಳಬಹುದು. ಮಾನಸಿಕ ನ್ಯೂನತೆಯ ಕಾರಣದಿಂದ ಮೆದುಳಿನ ಬೇರೆ ಬೇರೆ ಜಾಗಗಳಲ್ಲಿ ಯಾವ ಬಗೆಯ ಮಾತಿನ ಕೊರತ (ಅಫೇಸಿಯಾ)ಗಳು ಉಂಟಾಗುತ್ತವೆ ಎಂಬುದನ್ನು ತನ್ನ ಶೋಧಗಳಿಂದ ವೆರ್ನಿಕೆ ತೋರ್ಪಡಿಸಿದ್ದಾನೆ.
ಆ ಶೋಧಗಳಿಂದ ಮಾತಿನ ಬೇರೆ ಬಗೆಯ ತೊಂದರೆಗಳು ಯಾವವು ಎಂಬುದನ್ನು ವೆರ್ನಿಕೆ ಗುರುತಿಸಿದ್ದಾನೆ. ಈ ವೆರ್ನಿಕೆ ಅಫೇಸಿಯಾದಿಂದ ಬಳಲುವವರ ಉಚ್ಚಾರಣೆಗಳು ಸರಿಯಾಗಿದ್ದು, ಸೊಲ್ಲರಿಮೆಗೆ ಒಪ್ಪಿತವಾದ ಸೊಲ್ಲುಗಳನ್ನೇ ಉತ್ಪಾದಿಸುತ್ತಿದ್ದರೂ, ಅರ್ಥಗಳನ್ನು ಒದಗಿಸು ನೆಲೆಗಳು ಮಾತ್ರ ಸರಿಯಾಗಿರುವುದಿಲ್ಲ. ಹಾಗೂ ಬೇರೆಯವರು ಮಾತಾಡಿದ್ದನ್ನು ಇವರಿಗೆ ಅರ್ಥ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ಮಾತನ್ನು ಉತ್ಪಾದಿಸುವ ನೆಲೆ ಇವರಿಗೆ ಸರಿಯಾಗಿದ್ದರೂ, ಅರ್ಥಗಳನ್ನು ಒದಗಿಸುವ ಹಾಗೂ ಅರ್ಥಗಳನ್ನು ಪಡೆಯುವ ನೆಲೆಯಲ್ಲಿ ಇವರು ತೊಂದರೆಗಳನ್ನು ಎದುರಿಸುತ್ತಾರೆ.
ನಮ್ಮ ಮೆದುಳಿನಲ್ಲಿ ಉಲಿ ಮತ್ತು ಆರ್ಥಗಳನ್ನು ಕೊಡಿಟ್ಟುಕೊಂಡು ಮತ್ತೆ ಅವುಗಳನ್ನು ನಮ್ಮ ಬಳಕೆಗೆ ಒದಗಿಸುವ ಜಾಗಗಳು ಬೇರೆ ಬೇರೆ ಎಂಬುದನ್ನು ಮೇಲಿನ ಚರ್ಚೆಗಳಿಂದ ನಿಚ್ಚಳವಾಗಿ ಕಾಣುತ್ತದೆ. ಅವುಗಳನ್ನು ಬ್ರಾಕಾ ಜಾಗ (ಏರಿಯಾ) ಮತ್ತು ವೆರ್ನಿಕೆ ಜಾಗವೆಂದು ಗುರುತಿಸಲಾಗಿದೆ. ಈ ಎರಡು ಜಾಗಗಳಲ್ಲಿ ಯಾವುದೇ ಒಂದಕ್ಕೆ ತೊಂದರೆಯಾದರೂ ನುಡಿಯನ್ನು ಸರಾಗವಾಗಿ ಸಂವಹಿಸಲು ಸಾಧ್ಯವಿಲ್ಲ. ಹಾಗಾಗಿ ಈ ಎರಡೂ ಜಾಗಗಳು ನುಡಿ ಗಳಿಕೆ ಹಾಗೂ ಬಳಕೆಯ ನೆಲೆಯಿಂದ ತುಂಬಾ ಮುಖ್ಯವಾಗಿವೆ.
- ಉಲಿ ಪೆಟ್ಟಿಗೆಗೆ (ಪದಗಳನ್ನು ಹೇಳುತ್ತೇವೆ)
- ಮೋಟಾರ್ಕೋರಟೆಕ್ಸ್ (ಕ್ರಿಯೆಗಾಗಿ)
- ಬ್ರೋಕಾನ ಜಾಗಕ್ಕೆ (ಉಲಿಗಳಿಗಾಗಿ)
- ವೆರ್ನಿಕ್ನ ಜಾಗಕ್ಕೆ (ಅರ್ಥಗಳನ್ನು ಒದಗಿಸುವ/ಗಳಿಸುವ)
- ಪ್ರೈಮರಿ ವಿಸ್ಯುಯಲ್ ಕೊರಟೆಕ್ಸ್ ಟು ಪ್ರೈಮರಿ ಆಡಿಟರಿ ಏರಿಯಾ (ನಾವು ನೋಡುವ ಪದ) (ನಾವು ಕೇಳುವ ಪದ)
- ನೋಡುವ ಪಠ್ಯ (ಕಣ್ಣಿನ ನುಡಿ)
- ಕೇಳು ಉಲಿಗಳು (ಕಿವಿಯ ನುಡಿ)
ನಾವು ಜೋರಾಗಿ ಓದುವಾಗ ಕೇಳಿದ ಪದವನ್ನು ಮರುಬಳಿಸುವ
ಚಿತ್ರ – 01 : ವೆರ್ನಿಕೆ-ನರ್ಮನ್ ಗೇಶ್ಚ್ವಿಂಡ್ ಅವರ ಸರಳೀಕರಿಸಿದ ಮಾದರಿ
ಈ ಮೇಲಿನ ಚಿತ್ರ ನುಡಿಯನ್ನು ನಾವು ಹೇಗೆ ಗ್ರಹಿಸುತ್ತೇವೆ, ಓದುತ್ತೇವೆ ಹಾಗೂ ಹೇಳುತ್ತೇವೆ ಹಾಗೂ ಈ ಕೆಲಸ ಮೆದುಳಿನ ಮೂಲಕ ಹೇಗೆ ನಡೆಯುತ್ತದೆ ಎಂಬುದನ್ನು ತೋರಿಸುತ್ತದೆ. ಈ ಮಾದರಿ ನುಡಿ ಮತ್ತು ಮೆದುಳುಗಳ ನಡುವಣ ನಂಟಸ್ತಿಕೆಯ ಹೊಸ ಆಯಾಮಗಳನ್ನು ತೋರಿಸುತ್ತದೆ. ನುಡಿ ಮೆದುಳಿನಲ್ಲಿ ಯುಕ್ತತೆಯಿಂದ ನೆಲೆಗೊಂಡಿರುತ್ತದೆ.
ಬ್ರಾಕಾ ಜಾಗವು ಆಡಿಟರಿ ಮತ್ತು ಮೋಟಾರ್ ಕರ್ಟೆಕ್ಸ್ಗಳಗೆ ಹೊಂದಿಕೊಂಡಿರುತ್ತದೆ. ಈ ಆಡಿಟರಿ ಕರ್ಟೆಕ್ಸ್ ಕಿವಿಯ ಮೂಲಕ ಬರುವ ಸಂಕೇತಗಳನ್ನು ಪಡೆಯುತ್ತದೆ. ಹಾಗೂ ಮೋಟಾರ್ ಕರ್ಟೆಕ್ಸ್ನಿಂದ ಸಂಕೇತಗಳು ಮೆದುಳಿನ ಗ್ರಂಥಿಗಳಿಗೆ ಹೋಗುತ್ತವೆ. ಅಲ್ಲಿಂದ ನಮ್ಮ ಎಲ್ಲ ನುಡಿಗೆ ಸಂಬಂಧಿಸಿದ ಚಟುವಟಿಕೆಗಳು ಶುರುವಾಗುತ್ತವೆ. ಉಲಿ ಸಂಕೇತಗಳು ಉಲಿಪೆಟ್ಟಿಗೆಗೆ ಕೂಡ ಇದೇ ಜಾಗದಿಂದ ಹೊರಹೊಮ್ಮುತ್ತವೆ. ಈ ಕೇಳಗಿನ ಎರಡೂ ಚಿತ್ರಗಳು ಇನ್ನಷ್ಟೂ ವಿವರವಾಗಿ ನುಡಿ ಹಾಗೂ ಮೆದುಳಿನ ನಡುವಣ ನಂಟಸ್ತಿಕೆಯನ್ನು ತಿಳಿಸುತ್ತವೆ.
ಈ ಮೇಲಿನ ಎಲ್ಲ ಚರ್ಚೆಗಳು ಕೇವಲ ನುಡಿ ಎಂದರೇನು ಎಂಬ ಕೇಳ್ವಿಗೆ ಬದಲುಗಳನ್ನು ಕೊಡುವುದಕ್ಕೆ ಮಾತ್ರ ಸೀಮಿತಗೊಳ್ಳದೇ, ನುಡಿ ಸ್ವರೂಪದ ಬೇರೆ ಬೇರೆ ನೆಲೆಗಳನ್ನು ತಿಳಿಯುವ ಯತ್ನವನ್ನು ಮಾಡಲಾಗಿದೆ. ಆ ಮೂಲಕ ಇಲ್ಲಿಯ ಚರ್ಚೆಗಳು ನುಡಿಯ ಬೇರೆ ಬೇರೆ ಆಯಾಮಗಳನ್ನು ಚರ್ಚಿಸುವುದಷ್ಟೆ ಅಲ್ಲ, ಬದಲಾಗಿ ನುಡಿ ಕುರಿತ ಭಿನ್ನ ಕಣ್ನೋಟಗಳನ್ನು ತೋರ್ಪಡಿಸುತ್ತವೆ. ನುಡಿಯರಿಮೆಗೆ ನುಡಿಯ ಯಾವ ನೆಲೆಗಳು ಅತ್ಯಂತ ಮಹತ್ವ ಸಂಗತಿಗಳು ಅನ್ನುವ ನಿಲುವುಗಳನ್ನೂ ಈ ಟಿಪ್ಪಣಿಯಲ್ಲಿ ಗಮನಿಸಲು ಸಾಧ್ಯವಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.
ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.
ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.
ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.
ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.
ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.
ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.
ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.
ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.
ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.
ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.
ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.
ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
~ಗೋವರ್ಧನ ನವಿಲೇಹಾಳು
ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ ಖಾಲಿಯಾದ ಈ ಕ್ಷೇತ್ರದಲ್ಲಿ ಏಪ್ರಿಲ್ 9, 2026ರಂದು ಮತದಾನ ನಡೆಯಲಿದೆ. ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ಈ ಉಪಚುನಾವಣೆಯು ಕೇವಲ ಒಂದು ಸೀಟಿನ ಹೋರಾಟವಲ್ಲ; ಇದು ಕರ್ನಾಟಕ ರಾಜಕೀಯದಲ್ಲಿ ಪ್ರತಿಷ್ಠೆ, ಕುಟುಂಬ ವಾರಸುದಾರಿಕೆ, ಸಮುದಾಯ ಸಮೀಕರಣಗಳು ಮತ್ತು ಅಭಿವೃದ್ಧಿ ನಿರೀಕ್ಷೆಗಳ ನಡುವಿನ ಸಂಕೀರ್ಣ ಸಮರವಾಗಿದೆ.
ಶಾಮನೂರು ಶಿವಶಂಕರಪ್ಪ ಅವರು ತಾನು ಸ್ಪರ್ಧಿಸಿದ ಈ ಕ್ಷೇತ್ರವನ್ನು ಎಂದೂ ಸೋಲದೆ ಉಳಿಸಿಕೊಂಡಿದ್ದರು. ಅವರ ನಂತರ ಕಾಂಗ್ರೆಸ್ ಪಕ್ಷವು ಅವರ ಮೊಮ್ಮಗ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಇದು ಕಾಂಗ್ರೆಸ್ ಹೇಳುವಂತೆ “ಕುಟುಂಬಕ್ಕೆ ಟಿಕೆಟ್ ನೀಡುವ ಸಾಂಪ್ರದಾಯಿಕ ನಡೆ”ಯಾಗಿದೆ. ಬಿಜೆಪಿ ಪಕ್ಷವು ಶ್ರೀನಿವಾಸ್ ಟಿ. ದಾಸಕರಿಯಪ್ಪ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ಇದರ ಜೊತೆಗೆ SDPIಯ ಅಫ್ಸರ್ ಕೊಡ್ಲಿಪೇಟೆ, ಸಾದಿಕ್ ಪೈಲ್ವಾನ್ ಸೇರಿದಂತೆ 25 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆದರೆ ಮುಖ್ಯ ಹೋರಾಟ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆಯೇ ಇದೆ .
ಈ ಉಪಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಪಾತ್ರ ನಿರ್ಣಾಯಕವಾಗಿದೆ. ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಸಂಖ್ಯೆ ಸುಮಾರು 40% ಇದೆ ಎಂದು ಅಂದಾಜು. ಶಾಮನೂರು ಕುಟುಂಬಕ್ಕೆ ಐತಿಹಾಸಿಕ ಬೆಂಬಲವಿದ್ದರೂ, ಈ ಬಾರಿ ಮುಸ್ಲಿಂ ನಾಯಕರು ಟಿಕೆಟ್ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಪಕ್ಷವು ಕುಟುಂಬ ವಾರಸುದಾರಿಕೆಯನ್ನು ಆಯ್ಕೆ ಮಾಡಿದ್ದಕ್ಕೆ ಅಸಮಾಧಾನ ವ್ಯಕ್ತವಾಗಿದೆ. ಸಚಿವ ಜಮೀರ್ ಅಹಮದ್ ಅವರ ಪ್ರಚಾರ ಮತ್ತು ಸಿಎಂ ಸಿದ್ದರಾಮಯ್ಯ ಅವರ ಭೇಟಿಗಳು ಈ ಅಸಮಾಧಾನವನ್ನು ತಣಿಸುವ ಪ್ರಯತ್ನವಾಗಿದೆ. ಆದರೆ ಮುಸ್ಲಿಂ ಮತಗಳ ವಿಭಜನೆಯ ಸಾಧ್ಯತೆ ಇದೆ. SDPI ಮತ್ತು ಇತರ (ಕಾಂಗ್ರೆಸ್ ಸಾದಿಕ್ ಅವರನ್ನು ಪೈಲ್ವಾನ್ ತಟಸ್ಥರಾಗಿರುವಂತೆ ಹೇಳಿದೆ) ಮುಸ್ಲಿಂ ಅಭ್ಯರ್ಥಿಗಳು ಈ ವಿಭಜನೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ. ಬಿಜೆಪಿ ಎಸ್ಟಿ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಅಹಿಂದ ಮತಗಳನ್ನು ಸೆಳೆಯುವ ತಂತ್ರ ರೂಪಿಸಿದೆ.
ಕಾಂಗ್ರೆಸ್ ಪಕ್ಷಕ್ಕೆ ಈ ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದೆ. ರಾಜ್ಯದಲ್ಲಿ ಆಡಳಿತಾರೂಢ ಪಕ್ಷವಾಗಿ ತನ್ನ ಬಲವನ್ನು ಉಳಿಸಿಕೊಳ್ಳುವುದು ಅತ್ಯಗತ್ಯ. ಸಿಎಂ ಸಿದ್ದರಾಮಯ್ಯ ಅವರು ಬಜೆಟ್ನಲ್ಲಿ ದಾವಣಗೆರೆ ದಕ್ಷಿಣಕ್ಕೆ 100 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದು, ಇದು ಉಪಚುನಾವಣೆಗೆ ಮುನ್ನ ಜನರನ್ನು ಆಕರ್ಷಿಸುವ ಪ್ರಯತ್ನವಾಗಿ ಕಾಣುತ್ತಿದೆ. ಅನುಕಂಪದ ಅಲೆಯೂ ಕಾಂಗ್ರೆಸ್ಗೆ ಬೆಂಬಲ ನೀಡುವ ಸಾಧ್ಯತೆಯಿದೆ. ಆದರೆ ಪಕ್ಷದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್ ಅವರನ್ನು ಪಕ್ಷ ಚುನಾವಣೆಯಲ್ಲಿ ತಟಸ್ಥರಾಗಿರುವಂತೆ ಹೇಳಿದೆ. ಆದರೆ ಇದು ಮುಸಲ್ಮಾನರ ಒಳಮುನಿಸನ್ನು ತಣಿಸುತ್ತದೆಯೇ ಅಥವಾ ಮತ ವಿಭಜನೆಗೆ ಕಾರಣವಾಗುತ್ತದೆಯೇ ಎಂಬುದು ಫಲಿತಾಂಶದ ಮೇಲೆ ಪರಿಣಾಮವನ್ನಂತೂ ಬೀರುತ್ತದೆ.
ಬಿಜೆಪಿ ಪಕ್ಷಕ್ಕೆ ಇದು ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಅವಕಾಶ. 2023ರ ವಿಧಾನಸಭಾ ಚುನಾವಣೆಯಲ್ಲಿ ಶಾಮನೂರು ಶಿವಶಂಕರಪ್ಪ ಅವರು ಬಿಜೆಪಿ ಅಭ್ಯರ್ಥಿ ಅಜಯ್ ಕುಮಾರ್ ಅವರನ್ನು ಸುಮಾರು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಬಿಜೆಪಿ “ಬದಲಾವಣೆ”ಯ ಸಂದೇಶವನ್ನು ನೀಡುತ್ತಿದೆ. ಅಭಿವೃದ್ಧಿ ಕೊರತೆ, ಗ್ಯಾರಂಟಿ ಯೋಜನೆಗಳ ವೆಚ್ಚ ಮತ್ತು ಸರ್ಕಾರದ ನೀತಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಶ್ರೀನಿವಾಸ್ ದಾಸಕರಿಯಪ್ಪ ಅವರು ಕುಟುಂಬ ರಾಜಕಾರಣಕ್ಕೆ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಆದರೆ ಬಿಜೆಪಿಗೆ ಕ್ಷೇತ್ರದಲ್ಲಿ ಐತಿಹಾಸಿಕ ಬೆಂಬಲ ಕಡಿಮೆ. ಮುಸ್ಲಿಂ ಮತ್ತು ಅಹಿಂದ ಮತಗಳನ್ನು ತನ್ನತ್ತ ಸೆಳೆಯುವುದು ಅವರ ದೊಡ್ಡ ಸವಾಲು.
ದಾವಣಗೆರೆ ದಕ್ಷಿಣ ಕ್ಷೇತ್ರವು ಕೈಗಾರಿಕೆ, ವ್ಯಾಪಾರ ಮತ್ತು ಕೃಷಿಯ ಸಮ್ಮಿಶ್ರಣವಾಗಿದೆ. ರಸ್ತೆಗಳು, ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಜನರ ಮುಖ್ಯ ನಿರೀಕ್ಷೆಗಳು. ಹಿರಿಯ ಶಾಸಕರ ಕಾಲದಲ್ಲಿ ಕ್ಷೇತ್ರಕ್ಕೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಆದರೆ ಇಂದು ಯುವಕರ ಉದ್ಯೋಗ, ಮಹಿಳೆಯರ ಸುರಕ್ಷತೆ ಮತ್ತು ಸ್ಥಳೀಯ ಸಮಸ್ಯೆಗಳು ಬಗೆಹರಿಯಬೇಕಿದೆ. ಉಪಚುನಾವಣೆಯಲ್ಲಿ ಅಭ್ಯರ್ಥಿಗಳು ಭರವಸೆಗಳ ಮಳೆ ಸುರಿಸುತ್ತಿದ್ದಾರೆ. ಆದರೆ ಜನರು ನೋಡುವುದು ಕಾರ್ಯನಿರ್ವಹಣೆಯನ್ನು. 100 ಕೋಟಿ ಅನುದಾನ ಘೋಷಣೆಯಂತಹ ಕ್ರಮಗಳು ತಾತ್ಕಾಲಿಕ ಆಕರ್ಷಣೆಯಾಗಬಹುದು, ಆದರೆ ಸುಸ್ಥಿರ ಅಭಿವೃದ್ಧಿ ಅಗತ್ಯ.
ರಾಜಕೀಯವು ಜನಸೇವೆಗಾಗಿ ಇರಬೇಕು, ಅಧಿಕಾರಕ್ಕಾಗಿ ಅಲ್ಲ ಎಂಬುದು ಎಲ್ಲರೂ ಹೇಳುವ ಮಾತು. ಆದರೆ ವಾಸ್ತವದಲ್ಲಿ ಕುಟುಂಬ ರಾಜಕಾರಣ, ಜಾತಿ-ಸಮುದಾಯ ಲೆಕ್ಕಾಚಾರಗಳು ಪ್ರಬಲವಾಗಿವೆ. ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬದ ವರ್ಚಸ್ಸು ದೀರ್ಘಕಾಲದ್ದು. ಇದು ಜನಸೇವೆಯ ಫಲವೋ ಅಥವಾ ವ್ಯವಸ್ಥೆಯ ದೌರ್ಬಲ್ಯವೋ ಎಂಬುದನ್ನು ಜನರು ನಿರ್ಧರಿಸಬೇಕು. ಬಿಜೆಪಿ “ಬದಲಾವಣೆ”ಯ ಸಂದೇಶ ನೀಡುತ್ತಿದ್ದರೂ, ಅದು ಕೇವಲ ವಿರೋಧ ಪಕ್ಷದ ಧ್ವನಿಯಾಗಿ ಉಳಿಯದೆ ಸಕಾರಾತ್ಮಕ ಪರ್ಯಾಯವಾಗಬೇಕು.
ಈ ಉಪಚುನಾವಣೆಯಲ್ಲಿ ಮತದಾರರ ಜವಾಬ್ದಾರಿ ದೊಡ್ಡದು. ಅನುಕಂಪ, ಕುಟುಂಬ ನಿಷ್ಠೆ ಅಥವಾ ಸಮುದಾಯ ಲೆಕ್ಕಾಚಾರಕ್ಕಿಂತ ಹೆಚ್ಚಾಗಿ ಅಭಿವೃದ್ಧಿ, ಪಾರದರ್ಶಕತೆ ಮತ್ತು ಜನೋಪಯೋಗಿ ಕಾರ್ಯಗಳನ್ನು ಆಧರಿಸಿ ಮತ ನೀಡಬೇಕು. ಯುವಕರು ಮತ್ತು ಮಹಿಳೆಯರು ಹೆಚ್ಚು ಸಕ್ರಿಯರಾಗಬೇಕು. ಮತದಾನ ಶೇಕಡಾ 80ಕ್ಕಿಂತ ಹೆಚ್ಚು ಆಗುವಂತೆ ಮಾಡುವುದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಸೂಚಕ.
ಕರ್ನಾಟಕ ರಾಜಕೀಯದಲ್ಲಿ ಉಪಚುನಾವಣೆಗಳು ಸಣ್ಣ ಪರೀಕ್ಷೆಗಳು. ದಾವಣಗೆರೆ ದಕ್ಷಿಣದ ಫಲಿತಾಂಶವು 2028ರ ವಿಧಾನಸಭಾ ಚುನಾವಣೆಗೆ ಸಂದೇಶ ನೀಡುತ್ತದೆ. ಕಾಂಗ್ರೆಸ್ ಗೆದ್ದರೆ ಅದು ತನ್ನ ಬಲವನ್ನು ಮತ್ತಷ್ಟು ಭದ್ರಪಡಿಸಿಕೊಳ್ಳುತ್ತದೆ. ಬಿಜೆಪಿ ಗೆದ್ದರೆ ಅದು ವಿರೋಧ ಪಕ್ಷವಾಗಿ ತನ್ನ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಗೆಲುವು ಯಾರದ್ದಾದರೂ, ಜಯಿಸುವುದು ದಾವಣಗೆರೆ ದಕ್ಷಿಣದ ಜನರೇ ಆಗಬೇಕು.
ಈ ಹೋರಾಟದಲ್ಲಿ ರಾಜಕೀಯ ಪಕ್ಷಗಳು ಜನರ ಸಮಸ್ಯೆಗಳನ್ನು ಕೇಂದ್ರದಲ್ಲಿ ಇರಿಸಿಕೊಂಡು ಪ್ರಚಾರ ಮಾಡಲಿ. ಮತದಾರರು ತಮ್ಮ ಧ್ವನಿಯನ್ನು ಸ್ಪಷ್ಟವಾಗಿ ಮತ್ತು ನಿರ್ಭಯವಾಗಿ ವ್ಯಕ್ತಪಡಿಸಲಿ. ದಾವಣಗೆರೆ ದಕ್ಷಿಣ ಉಪಚುನಾವಣೆಯು ಪ್ರಜಾಪ್ರಭುತ್ವದ ಸೌಂದರ್ಯವನ್ನು ಪ್ರದರ್ಶಿಸುವ ಅವಕಾಶವಾಗಲಿ. ಅಭಿವೃದ್ಧಿ, ಸಮಾನತೆ ಮತ್ತು ಪಾರದರ್ಶಕ ಆಡಳಿತದತ್ತ ಕ್ಷೇತ್ರ ಸಾಗಲಿ ಎಂಬುದೇ ನಮ್ಮ ಆಶಯ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು
ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.
ಖರ್ಗೋನ್ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.
ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.
ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

-
ದಿನದ ಸುದ್ದಿ6 days agoವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ
-
ದಿನದ ಸುದ್ದಿ4 days agoದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ
-
ದಿನದ ಸುದ್ದಿ4 days agoಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ
-
ದಿನದ ಸುದ್ದಿ6 days agoದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ
-
ದಿನದ ಸುದ್ದಿ11 hours agoಮಹಿಳಾ ಮತದಾರರನ್ನು ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವ ಬಿಜೆಪಿ ಕುತಂತ್ರ ವಿಫಲವಾಯಿತು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ




