ರಾಜಕೀಯ
ಭಾಷೆ, ರಾಜಕಾರಣ ಮತ್ತು ವ್ಯಾಕರಣ
ಭಾಷೆಯೊಂದರ ಉಳಿವಿನ ಪ್ರಶ್ನೆ ಚಾಲ್ತಿಗೆ ಬಂದಾಗಲೆಲ್ಲ ಅಧಿಕಾರ ಕೇಂದ್ರವು ಪ್ರತಿಕ್ರಿಯಿಸುವ ಉತ್ಸಾಹವನ್ನೇನೋ ತೋರುತ್ತದೆ. ತಾನು ಈ ವಿಷಯದಲ್ಲಿ ಗಂಭೀರವಾಗಿರುವುದಾಗಿ ಸಂದೇಶ ರವಾನಿಸುತ್ತದೆ. ಭವಿಷ್ಯದಲ್ಲಿ ಭಾಷೆಯ ಬಳಕೆಗಳ ಬಗ್ಗೆ ಎಚ್ಚರ ಇರುವುದಾಗಿಯೂ ಸ್ಪಷ್ಟಪಡಿಸುತ್ತದೆ. ಎಲ್ಲ ಸಮುದಾಯಗಳ ಜನರೂ ಜಾಗತಿಕ ಮನ್ನಣೆ ಪಡೆದ ಪರಭಾಷೆಯ ಮೇಲೆ ಹಿಡಿತ ಸಾಧಿಸಿ ಸಾಮಾಜಿಕ ಪ್ರತಿಷ್ಠೆಯನ್ನು ಗಳಿಸಿಕೊಳ್ಳುವಂತಾಗಲಿ ಎಂಬ ಸದುದ್ದೇಶದೊಂದಿಗೆ ಹೆಜ್ಜೆಯಿರಿಸುತ್ತಿರುವುದಾಗಿ ಸಮಜಾಯಿಷಿ ನೀಡುತ್ತದೆ. ಆದರೆ, ನಮ್ಮದಲ್ಲದ ಭಾಷೆಯ ಮೇಲೆ ಹಿಡಿತ ಸಾಧಿಸಿ ಪ್ರತಿಷ್ಠೆ ಗಳಿಸಿಕೊಳ್ಳುವ ಉಮೇದು ಅತ್ಯಂತ ಸಂಕುಚಿತವಾದದ್ದು ಎಂಬುದು ಅದಕ್ಕೆ ಅರ್ಥವಾಗುವುದಿಲ್ಲ. ಇನ್ನೊಂದು ಭಾಷೆಯ ಮೇಲೆ ಹಿಡಿತ ಸಾಧಿಸುವುದಷ್ಟೇ ಮುಖ್ಯ ಎಂಬ ಸಾರ್ವತ್ರಿಕ ಭಾವನೆಯನ್ನೇ ಆಧರಿಸಿಕೊಂಡು ನಿರ್ಧಾರ ಕೈಗೊಳ್ಳುವುದರಲ್ಲಿಯೇ ಆಸಕ್ತಿ ತೋರುತ್ತದೆ.
ಪ್ರಾಯೋಗಿಕವಾಗಿ 1000 ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ಆರಂಭಿಸುವ ಸರ್ಕಾರಿ ಪ್ರಸ್ತಾವವು ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಇದೇ ಸಂದರ್ಭದಲ್ಲಿ ಆಯೋಜಿತವಾದ 84ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನವು ತಾರ್ಕಿಕ ಚರ್ಚೆಯನ್ನೂ ಹುಟ್ಟುಹಾಕಿದೆ. ಈ ವೇದಿಕೆಯ ಮೂಲಕ ವ್ಯಕ್ತವಾದ ತಾರ್ಕಿಕ ಪ್ರಶ್ನೆಗಳು ಅಧಿಕಾರ ಕೇಂದ್ರದ ಪ್ರತಿನಿಧಿಗಳೊಳಗೆ ನಿಜವಾದ ಭಾಷಾ ಪ್ರಜ್ಞೆಯನ್ನು ಬಿತ್ತುವ ರೀತಿಯಲ್ಲಿಯೇ ಇವೆ. ಆದರೆ, ಇವು ಮುನ್ನೆಲೆಗೆ ತಂದ ಚರ್ಚೆಯು ಸಂವಾದವನ್ನು ಹುಟ್ಟುಹಾಕುವ ಬದಲು ವಿವಾದವನ್ನೇ ಸೃಷ್ಟಿಸಿದೆ. ಇದಕ್ಕೆ ಕಾರಣ ಚರ್ಚೆಯ ವೇಳೆ ವ್ಯಕ್ತವಾದ ಅಭಿಪ್ರಾಯಗಳನ್ನು ವಿಶಾಲವಾಗಿ ಗ್ರಹಿಸದೇ ಇರುವುದು.
ರಾಜಕೀಯ ಚಾಣಾಕ್ಷತೆ
ಈ ಬಗೆಯ ವಿವಾದ ಇದೇ ಮೊದಲೇನಲ್ಲ. ಭಾಷೆ ಕುರಿತಾದ ಸರ್ಕಾರಿ ನಿರ್ಧಾರ ವ್ಯಕ್ತವಾದಾಗ ಸಹಜವಾಗಿಯೇ ಗೊಂದಲಗಳು ಏರ್ಪಡುತ್ತವೆ. ಅಂಥದ್ದೊಂದು ಗೊಂದಲದ ವಾತಾವರಣ ಸೃಷ್ಟಿಯಾಗುವಂತೆ ಅಧಿಕಾರ ರಾಜಕಾರಣ ಅತ್ಯಂತ ಚಾಣಾಕ್ಷಯುತವಾಗಿ ನೋಡಿಕೊಳ್ಳುತ್ತದೆ. ಭಾಷಾ ಸಂಬಂಧಿ ಚರ್ಚೆಯನ್ನು ಸಂವಾದಕ್ಕೆ ತಿರುಗಿಸಿ ಮಹತ್ವಪೂರ್ಣ ಭಾಷಾ ಆಂದೋಲನಕ್ಕೆ ಪ್ರೇರಣೆ ನೀಡುವ ಬದಲು ವಿವಾದದ ಸೀಮಿತ ಚೌಕಟ್ಟಿನೊಳಗೆ ಕಟ್ಟಿಹಾಕುವ ವೈಚಿತ್ರ್ಯವನ್ನು ಸೃಷ್ಟಿಸುತ್ತದೆ. ಇಂಥ ಸಂದರ್ಭದಲ್ಲೆಲ್ಲಾ ಭಾಷೆಯ ಉಳಿವಿನ ಕುರಿತು ಧ್ವನಿಯೆತ್ತುವ ನಾಟಕವಾಡುವ ಸಂಘಟನೆಗಳ ಪ್ರತಿನಿಧಿಗಳು ಮೌನಪ್ರೇಕ್ಷಕರಾಗಿಯೇ ಉಳಿದುಬಿಡುತ್ತಾರೆ. ನಿಜವಾದ ಕಾಳಜಿಯೊಂದಿಗೆ ಧ್ವನಿಯೆತ್ತುವ ಬೆರಳೆಣಿಕೆಯ ಹೋರಾಟಗಾರರು, ಚಿಂತಕರು ಮತ್ತು ರಾಜಕೀಯ ವಲಯದ ಪ್ರತಿನಿಧಿಗಳ ನಡುವೆ ಮಾತಿನ ಸಮರವೇ ನಿರ್ಮಾಣವಾಗಿಬಿಡುತ್ತದೆ. ಇಂಥ ವೇಳೆ ಸಾಹಿತ್ಯ ಸಮ್ಮೇಳನಗಳಂಥ ವೇದಿಕೆಗಳು ಜನಸಮೂಹದಲ್ಲಿ ಸರಿಯಾಗಿ ಆಲೋಚಿಸುವ ಒತ್ತಡವನ್ನುಂಟುಮಾಡುತ್ತವೆ. ಈ ವಿಷಯದಲ್ಲಿ ಧಾರವಾಡದಲ್ಲಿ ನಡೆದ ಅಖಿಲ ಭಾರತ ಸಾಹಿತ್ಯ ಸಮ್ಮೇಳನವು ನಿಜವಾದ ಕಾಳಜಿಯನ್ನು ವ್ಯಕ್ತಪಡಿಸಿದೆ.
ತೀಕ್ಷ್ಣ ಪ್ರತಿಕ್ರಿಯೆ
ಒಂದು ಸಾವಿರ ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸುವ ನಿರ್ಧಾರ ಪ್ರಚುರಪಡಿಸಿ ಸಾರ್ವಜನಿಕ ಶಿಕ್ಷಣ ವಲಯವನ್ನು ಪ್ರತಿಷ್ಠಿತವಾಗಿಸುವ ಯೋಚನೆಗೆ ಪ್ರತಿಯಾಗಿ ಸಮ್ಮೇಳನವು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ಉದ್ಘಾಟನೆಯ ದಿನದಿಂದಲೇ ಸ್ಪಷ್ಟ ಸಂದೇಶ ರವಾನಿಸಿದ ಸಮ್ಮೇಳನವು ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸುವ ನಿರ್ಧಾರವನ್ನು ಅನುಷ್ಠಾನಗೊಳಿಸಬಾರದು ಎಂಬ ಬಹುಮುಖ್ಯ ಆಗ್ರಹವನ್ನು ನಿರ್ಣಯದ ರೂಪದಲ್ಲಿ ಮುಂದಿಟ್ಟಿತು.
ಉದ್ಘಾಟನೆಯ ದಿನದಂದು ಸಾಹಿತಿ ಡಾ.ಚಂದ್ರಶೇಖರ ಪಾಟೀಲ್ ಅವರು ತಮ್ಮ ಎಂದಿನ ವ್ಯಂಗ್ಯದ ಧಾಟಿಯಲ್ಲಿ ಆಂಗ್ಲಮಾಧ್ಯಮ ಶಾಲೆಗಳ ಪರವಾದ ಪ್ರಸ್ತಾಪವನ್ನು ತರಾಟೆಗೆ ತೆಗೆದುಕೊಂಡಿದ್ದರು. ಇಂಗ್ಲಿಷ್ ಪರವಾದ ನಿರ್ಧಾರಗಳನ್ನು ಅನುಷ್ಠಾನಗೊಳಿಸುವ ಉತ್ಸಾಹವು ಕನ್ನಡದ ಮೇಲೆ ಬಹುದೊಡ್ಡ ಪ್ರಹಾರದ ಮುನ್ಸೂಚನೆ ಎಂಬರ್ಥದ ವಿಶ್ಲೇಷಣೆಯನ್ನು ನೀಡಿದ್ದರು. ಆದರೆ, ಅವರ ಮಾತುಗಳಲ್ಲಿನ ತಾರ್ಕಿಕತೆಯು ಹಿನ್ನೆಲೆಗೆ ಸರಿದು ವ್ಯಕ್ತಿಗತ ದೃಷ್ಟಿಕೋನಗಳು ಆದ್ಯತೆ ಪಡೆದು ಚರ್ಚೆಗೊಳಪಟ್ಟವು.
ಭಾಷೆಯ ಬಗ್ಗೆ ಚರ್ಚಿಸುವಾಗಲೆಲ್ಲಾ ವ್ಯಕ್ತಿಗತ ಬದ್ಧತೆಯ ಪ್ರಶ್ನೆಗಳು ನುಸುಳಿಕೊಂಡು ಸಂವಾದದ ಸಾಧ್ಯತೆಯನ್ನು ಮೊಟಕುಗೊಳಿಸುತ್ತವೆ. ನಿಮ್ಮ ಮಕ್ಕಳು, ಮೊಮ್ಮಕ್ಕಳನ್ನು ಇಂಗ್ಲಿಷ್ ಶಾಲೆಗಳಿಗೆ ಕಳುಹಿಸಿ ಉಳಿದವರ ಮಕ್ಕಳು ಕನ್ನಡವನ್ನು ಕಲಿಯಬೇಕು ಎಂಬ ವಾದವನ್ನು ಮಂಡಿಸುವುದು ಎಷ್ಟರ ಮಟ್ಟಿಗೆ ಸರಿ ಎಂಬ ವಾದವನ್ನು ಮುಂದಿಡಲಾಗುತ್ತದೆ. ಈ ಚಿಂತಕರು, ಬುದ್ಧಿಜೀವಿಗಳ ಜಾಯಮಾನವೇ ಹಾಗೆ ಎಂಬ ಉಡಾಫೆ ದೃಷ್ಟಿಕೋನದಲ್ಲಿ ಮಾತೃಭಾಷೆಯಲ್ಲಿನ ಪ್ರಾಥಮಿಕ ಶಿಕ್ಷಣದ ವ್ಯಾಪಕ ಪ್ರಯೋಜನಗಳ ಸಾಧ್ಯತೆಯನ್ನು ಅವಸರವಸರದಲ್ಲಿ ಅಲ್ಲಗಳೆಯಲಾಗುತ್ತದೆ.
ಗಟ್ಟಿತನದ ಅಡಿಪಾಯ
ಮಾತೃಭಾಷೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆಯುವುದನ್ನು ವ್ಯಕ್ತಿತ್ವವೊಂದು ಗಟ್ಟಿತನದ ಬೌದ್ಧಿಕ ಅಡಿಪಾಯ ರೂಪಿಸಿಕೊಳ್ಳುವ ಕ್ರಮ ಎಂದೇ ಪರಿಭಾವಿಸಿಕೊಳ್ಳಬೇಕು. ಪ್ರಾಥಮಿಕ ಸರ್ಕಾರಿ ಶಾಲೆಗಳನ್ನು ಈ ನೆಲೆಯಲ್ಲಿಯೇ ಬಲಪಡಿಸಬೇಕು. ಇಂಗ್ಲಿಷ್, ಹಿಂದಿ ಸೇರಿದಂತೆ ಇತರೆ ಭಾಷೆಗಳನ್ನು ಗ್ರಹಿಸಿಕೊಳ್ಳುವ ಶೈಕ್ಷಣಿಕ ಮಾದರಿಗಳನ್ನು ರೂಪಿಸಬೇಕು. ಅದಕ್ಕಾಗಿ ಶಿಕ್ಷಕ ಸಮುದಾಯವನ್ನು ಸಿದ್ಧಗೊಳಿಸಬೇಕು. ನೇಮಕಾತಿಯ ನಂತರ ಆಯಾ ಕಾಲದ ಅಗತ್ಯಗಳಿಗೆ ಅನುಗುಣವಾಗಿ ಆದ್ಯತೆ ಪಡೆಯುವ ಭಾಷಾ ಶಿಕ್ಷಣದ ಹೊಸ ಆಯಾಮಗಳನ್ನು ಪರಿಚಯಿಸಿ ಕನ್ನಡವೂ ಸೇರಿದಂತೆ ವಿವಿಧ ಭಾಷೆಗಳ ಮೇಲೆ ಹಿಡಿತ ಸಾಧಿಸುವ ಸರಳ ಕ್ರಮಗಳ ಕಲಿಕೆಯ ಕಡೆಗೆ ಗಮನವೀಯುವ ಸಮಗ್ರ ನೀತಿಯನ್ನು ವಿನ್ಯಾಸಗೊಳಿಸಿ ಜಾರಿಗೆ ತರುವ ಬದ್ಧತೆಯನ್ನು ಸರ್ಕಾರದ ಶೈಕ್ಷಣಿಕ ಸಚಿವಾಲಯ ತೋರ್ಪಡಿಸಬೇಕು.
ಬದ್ಧತೆಯ ಕೊರತೆ
ಇಂಥ ಬದ್ಧತೆಯ ಕೊರತೆಯ ಕಾರಣಕ್ಕಾಗಿಯೇ ಪ್ರಾಥಮಿಕ ಹಂತದಿಂದಲೇ ಸರ್ಕಾರಿ ಶಾಲೆಯ ಮಕ್ಕಳು ಭಾಷೆಗೆ ಸಂಬಂಧಿಸಿದಂತೆ ಹಲವಾರು ಸಂಕೀರ್ಣ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಇಂಗ್ಲಿಷ್ ಕಲಿಯಲೇಬೇಕು, ಕಲಿಯದಿದ್ದರೆ, ಆ ವಿಷಯದಲ್ಲಿ ಅನುತ್ತೀರ್ಣರಾದರೆ ಟೀಕೆಗೆ ಗುರಿಯಾಗಬೇಕಾಗುತ್ತದೆ ಎಂಬ ಸಾಮಾಜಿಕ ಅಂಜಿಕೆಯು ಅವರೊಳಗೆ ಕೀಳರಿಮೆಯನ್ನು ಮೂಡಿಸುತ್ತದೆ. ಕಾನ್ವೆಂಟ್ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳನ್ನು ಉದಾಹರಿಸಿ ಅವರೊಂದಿಗೆ ಹೋಲಿಸಿ ‘ಅವರ ಮುಂದೆ ನೀವೇನೂ ಅಲ್ಲ’ ಎಂಬ ತಿವಿತದೊಂದಿಗಿನ ಸಂಬಂಧಿಕರು ಮತ್ತು ಹಿರಿಯರ ಮಾತುಗಳು ಅವರೊಳಗಿನ ಸಕಾರಾತ್ಮಕ ದೃಷ್ಟಿಕೋನಗಳನ್ನೇ ಕೊಂದುಬಿಡುತ್ತವೆ.
ಇಂಗ್ಲಿಷ್ ಭಾಷೆಯ ವ್ಯಾಮೋಹದ ಗುಂಗಿನಲ್ಲಿ ಕನ್ನಡವನ್ನು ತುಚ್ಛವಾಗಿ ನೋಡುವ ಈ ಮನುಷ್ಯಮಿತಿಯು ಕೌಟುಂಬಿಕ ಆದ್ಯತೆಯನ್ನು ಪಡೆಯಬಾರದು. ಅಷ್ಟೇ ಅಲ್ಲ, ಆ ಆದ್ಯತೆಯು ಸರ್ಕಾರಿ ವಲಯದ ಪ್ರಾಶಸ್ತ್ಯವನ್ನೂ ಪಡೆಯಬಾರದು. ಹಾಗಾದರೆ, ಒಂದು ಪೀಳಿಗೆಯ ಭಾಷಿಕ ಸಾಮಥ್ರ್ಯ ಮತ್ತು ವೈಚಾರಿಕ ವಿವೇಚನೆಯ ಬೆಳವಣಿಗೆಯ ತೀವ್ರತೆಗೆ ಕುಂದುಂಟಾಗುತ್ತದೆ.
ಕನ್ನಡ ಶೈಕ್ಷಣಿಕ ಸಂಸ್ಕಾರದ ಶ್ರೇಷ್ಠತೆ
ಪ್ರಾಥಮಿಕ ಶಾಲಾಹಂತದ ಮಕ್ಕಳಿಗೆ ಕನ್ನಡದಿಂದಲೇ ಶಿಕ್ಷಣದ ಸಂಸ್ಕಾರ ಪ್ರಾಪ್ತವಾಗಬೇಕು ಎಂಬ ಪ್ರತಿಪಾದನೆಯು ಕೇವಲ ಭಾವುಕ ಲೇಪವನ್ನಷ್ಟೇ ಹೊಂದಿಲ್ಲ. ಅದು ಮಕ್ಕಳ ಕಲಿಕೆಯ ಸಾಮಥ್ರ್ಯಕ್ಕೆ ಬೇಕಾದ ಆಶಾವಾದವನ್ನು ನೆಲೆಗೊಳಿಸುವ ವೈಜ್ಞಾನಿಕ ಮಾರ್ಗೋಪಾಯದ ಆಧಾರವನ್ನೂ ಹೊಂದಿರುವುದನ್ನು ಗಮನಿಸಲೇಬೇಕು.
ಮಗುವೊಂದು ಮತ್ತೊಂದು ಭಾಷೆಯೊಂದಿಗೆ ಸಂಪರ್ಕ ಸಾಧಿಸುವುದಕ್ಕೆ ಮುನ್ನ ತಾನಿರುವ ಕೌಟುಂಬಿಕ ಪರಿಸರದ ಭಾಷಿಕ ಸಂವಹನದ ಕ್ರಮಗಳ ಅರಿವು ಹೊಂದಿರಬೇಕಾಗುತ್ತದೆ. ನೇರವಾಗಿ ಅದು ಬೇರೊಂದು ಭಾಷೆಯ ಸಂಪರ್ಕ ಸಾಧಿಸಲು ಸಾಧ್ಯವಾಗುವುದಿಲ್ಲ. ಉದಾಹರಣೆ ಹಿಂದಿ ಅಥವಾ ಇಂಗ್ಲಿಷ್ ಭಾಷೆಗಳನ್ನು ಕನ್ನಡದ ಪರಿಸರದಲ್ಲಿ ಬೆಳೆದ ಮಕ್ಕಳು ಕನ್ನಡದ ಮೂಲಕವೇ ಕಂಡುಕೊಳ್ಳಬೇಕಾಗುತ್ತದೆ. ನೇರವಾಗಿ ಇಂಗ್ಲಿಷ್ ಪದಗಳನ್ನು ಹೇಳಿ ಅದೇ ಭಾಷೆಯ ವಾಕ್ಯಗಳನ್ನು ಉಲ್ಲೇಖಿಸಿ ಆ ಭಾಷೆಯನ್ನು ಕಲಿಸಲಾಗದು. ಮಾತೃಭಾಷೆಯ ನೆರವಿನೊಂದಿಗೆ ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳ ವ್ಯಾಕರಣ ಮತ್ತು ಅಭಿವ್ಯಕ್ತಿ ವಿಧಾನಗಳನ್ನು ಗೊತ್ತುಮಾಡಿಕೊಂಡರೆ ಮಕ್ಕಳೊಳಗೆ ಭಾಷಿಕ ಪ್ರಬುದ್ಧತೆ ಭಿನ್ನವಾಗಿ ನೆಲೆಯೂರುತ್ತದೆ. ಮಾತೃಭಾಷೆಯಲ್ಲಿ ಮಾತನಾಡುವ, ಮಾತನಾಡಿದ್ದನ್ನು ಸ್ಪಷ್ಟವಾಗಿ ಗ್ರಹಿಸುವ, ಗ್ರಹಿಸಿಕೊಂಡಿದ್ದನ್ನು ವಿವೇಚಿಸಿ ಅಭಿವ್ಯಕ್ತಿಸುವ ಕ್ರಮಗಳೊಂದಿಗೆ ಗುರುತಿಸಿಕೊಳ್ಳಲು ಅನುವಾಗುತ್ತದೆ. ಇದು ಪರಭಾಷೆಗಳ ಕಲಿಕೆಯಲ್ಲಿ ಗಮನಾರ್ಹ ಪಾತ್ರವಹಿಸುತ್ತದೆ.
ಭಾಷಾ ಸಂಕೀರ್ಣತೆಯ ಸವಾಲು
ಈ ಸೂಕ್ಷ್ಮವನ್ನು ಅರಿಯದೇ ಇದ್ದರೆ ಹೊಸ ಪೀಳಿಗೆಯ ಮಕ್ಕಳು ಭಾಷಾ ಸಂಕೀರ್ಣತೆಯನ್ನು ಎದುರಿಸುತ್ತಾರೆ. ಮುಂದಾಗುವ ಅಪಾಯವನ್ನು ಈಗಲೇ ಗ್ರಹಿಸಿರುವ ಕಾರಣಕ್ಕಾಗಿಯೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನವು ಉಳಿದೆಲ್ಲ ಪ್ರಚಲಿತ ಸಮಸ್ಯೆಗಳನ್ನು ಗಣನೆಗೆ ತೆಗೆದುಕೊಳ್ಳದೇ ಕೇವಲ ಭಾಷಿಕ ಸಮಸ್ಯೆಯನ್ನಷ್ಟೇ ಕಾಡಿಸಿಕೊಂಡು ಮಹತ್ವದ ಸಂದೇಶವನ್ನು ಸಾರುವಲ್ಲಿ ಯಶಸ್ವಿಯಾಗಿದೆ. ಸಾವಿರ ಆಂಗ್ಲಮಾಧ್ಯಮ ಶಾಲೆಗಳನ್ನು ಆರಂಭಿಸುವ ಯೋಚನೆಯನ್ನು ಅನುಷ್ಠಾನಗೊಳಿಸಬಾರದು ಎಂಬ ಸಮ್ಮೇಳನದ ಆಗ್ರಹ, ಪ್ರಾಥಮಿಕ ಶಿಕ್ಷಣವನ್ನು ರಾಷ್ಟ್ರೀಕರಣಗೊಳಿಸುವಂತೆ ಮುಂದಿಟ್ಟಿರುವ ಅದರ ಸಲಹಾತ್ಮಕ ನಿರ್ಣಯ ಮಹತ್ವಪೂರ್ಣ. ಆ ಮೂಲಕ ಸಮ್ಮೇಳನವು ಭಾಷೆಯ ಉಳಿವಿನ ಕುರಿತಾದ ತನ್ನ ಕಾಳಜಿ ಮತ್ತು ಬದ್ಧತೆಯನ್ನು ಸಾಬೀತುಪಡಿಸಿದೆ.
ಇಡೀ ಜಗತ್ತು ವಾಣಿಜ್ಯಿಕ ಲಾಭದ ಗುಂಗಿನೊಂದಿಗಿದ್ದಾಗ ಭಾಷೆ, ಸಂಸ್ಕøತಿ ಉಳಿವಿನ ಪ್ರಶ್ನೆಗಳು ಹಿನ್ನೆಲೆಗೆ ಸರಿಯುತ್ತವೆ. ಹಾಗೆ ಹಿನ್ನೆಲೆಗೆ ಸರಿಸುವ ಉದ್ದೇಶಪೂರ್ವಕ ಹುನ್ನಾರಗಳು ನಡೆದುಬಿಡುತ್ತವೆ. ವಾಣಿಜ್ಯಿಕ ಹಿತಾಸಕ್ತಿ ಮತ್ತು ಸಂಕುಚಿತ ರಾಜಕಾರಣದ ವಿಕಾರಗಳ ವಿಜೃಂಭಣೆಯ ಕಾರಣಕ್ಕಾಗಿಯೇ ಕನ್ನಡವು ಆಡಳಿತಾತ್ಮಕ ಆದ್ಯತೆಯ ಆವರಣದಿಂದ ಕ್ರಮೇಣ ಮರೆಯಾಗುವ ಮುನ್ಸೂಚನೆಗಳು ದೊರಕುತ್ತಲೇ ಇವೆ. ಈ ಹಿನ್ನೆಲೆಯಲ್ಲಿ ಸಮ್ಮೇಳನದ ಭಾಷಿಕ ನಿರ್ಣಯಗಳನ್ನು ಸಕಾಲಿಕ ಎಂದೇ ಪರಿಗಣಿಸಬೇಕಾಗುತ್ತದೆ.
ಮಾತೃಭಾಷೆಯೊಂದಿಗಿನ ಕಲಿಕಾನಂಟು
ಕಲಿಕೆಯು ಅತ್ಯಂತ ಸಹಜ ಪ್ರಕ್ರಿಯೆ. ಮಗುವಿನ ಬೆಳವಣಿಗೆಯ ವೇಳೆ ಕ್ರಮಾನಗುತವಾಗಿ ಆಂತರ್ಯದಲ್ಲಿ ಅಂತಸ್ಥಗೊಳ್ಳುವ ಪರಿಕಲ್ಪನೆ. ಇದನ್ನು ಒಳಗೊಳ್ಳುವ ಹಂಬಲದೊಂದಿಗೆ ಹೆಜ್ಜೆಯಿರಿಸುವ ಮಗು ಹಂತಹಂತವಾಗಿ ಪ್ರಬುದ್ಧತೆಯ ಹಾದಿಯನ್ನು ಕ್ರಮಿಸಲು ಸಾಧ್ಯವಾಗುತ್ತದೆ. ಈ ಹಾದಿಯಲ್ಲಿ ಮಾತೃಭಾಷೆಯದ್ದು ಅತ್ಯಂತ ಪ್ರಭಾವೀ ಪಾತ್ರ. ಆದರೆ, ಇದನ್ನು ನಿರ್ಲಕ್ಷಿಸಿ ಬೇರೊಂದು ಭಾಷೆಯನ್ನು ಮಕ್ಕಳ ಮನೋಲೋಕದಲ್ಲಿ ಒತ್ತಾಯಪೂರ್ವಕವಾಗಿ ಸೇರ್ಪಡೆಗೊಳಿಸುವ ಪ್ರಯತ್ನವು ಆಘಾತಕಾರಿ ಪರಿಣಾಮಗಳನ್ನು ಉಂಟುಮಾಡುತ್ತದೆ. ಸಮಗ್ರ ತಿಳುವಳಿಕೆಯನ್ನು ದಾಟಿಸುವುದಕ್ಕೆ ದಾರಿಮಾಡಿಕೊಡುವ ಕಲಿಕೆಯು ಭಾಷೆಯ ಪ್ರಸ್ತುತಿಯ ನೆರವಿನೊಂದಿಗೇ ಏರ್ಪಡಬೇಕಾಗುತ್ತದೆ.
ಮಗು ತನ್ನದಲ್ಲದ ಬೇರೊಂದು ಭಾಷೆಗೆ ಆರಂಭದಲ್ಲಿಯೇ ಒಗ್ಗಿಕೊಳ್ಳುವುದಿಲ್ಲ. ಅಪರಿಚಿತರನ್ನು ಕಂಡಾಕ್ಷಣ ಆತಂಕಗೊಳ್ಳುವ ಮನಸ್ಥಿತಿಯೇ ಬೇರೊಂದು ಭಾಷೆಯ ಅಭಿವ್ಯಕ್ತಿ ಎದುರುಗೊಂಡಾಗ ಪುನರಾವರ್ತಿತವಾಗುತ್ತದೆ. ಆಗ ಭಯ, ಆತಂಕ, ಅರ್ಥಕ್ಕೆಟುಕ್ಕುತ್ತಿಲ್ಲ ಎಂಬ ಕೊರಗುಗಳೆಲ್ಲವೂ ಒಟ್ಟಿಗೇ ದಾಳಿಗೈದು ಉದ್ದೇಶಿತ ಕಲಿಕೆ ಸಾಧ್ಯವಾಗುವುದೇ ಇಲ್ಲ. ಈ ಸೂಕ್ಷ್ಮತೆ ಅರಿತುಕೊಳ್ಳಲು ಭಾರೀ ಸಂಶೋಧನೆಯನ್ನೇನೋ ಕೈಗೊಳ್ಳಬೇಕಿಲ್ಲ. ಇಂಗ್ಲಿಷ್ನಿಂದಲೇ ಮಗುವಿನ ಕಲಿಕೆ ಆರಂಭವಾಗಬೇಕು ಎಂದು ವಾದಿಸುವ ಕನ್ನಡಿಗರು ತಮ್ಮ ತಮ್ಮ ಪ್ರಾಥಮಿಕ ಶಾಲಾ ದಿನಗಳನ್ನು ನೆನಪಿಸಿಕೊಂಡರೆ ಈ ಸೂಕ್ಷ್ಮ ಗಮನಕ್ಕೆ ಬರುತ್ತದೆ.
ಅಪಾಯದ ಮುನ್ಸೂಚನೆ
ಇಂಥ ಯಾವ ಸೂಕ್ಷ್ಮತೆಗಳನ್ನು ಪರಿಗಣಿಸದೇ ಪ್ರತಿಷ್ಠೆಯನ್ನಷ್ಟೇ ಕಾಡಿಸಿಕೊಂಡು ಮಕ್ಕಳ ಉದ್ಧಾರಕ್ಕೆ ಇಂಗ್ಲಿಷ್ ಮೂಲಕವೇ ಕಲಿಕೆಯ ಯಾನ ಶುರುವಾಗಬೇಕು ಎಂದು ಪ್ರತಿಪಾದಿಸುವುದು ತಾರ್ಕಿಕವೆನ್ನಿಸಿಕೊಳ್ಳುವುದಿಲ್ಲ. ಸಾಹಿತ್ಯ ಸಮ್ಮೇಳನಗಳಂಥ ವೇದಿಕೆಯ ಮೂಲಕ ಹೊರಹೊಮ್ಮುವ ಅಮೂಲ್ಯ ಚಿಂತನೆಗಳನ್ನು ಪರಿಗಣಿಸುವ ಆಡಳಿತಾತ್ಮಕ ಬದ್ಧತೆಯ ಕೊರತೆ ಎದ್ದುಕಾಣುತ್ತಿರುವಾಗ ಇಂಥ ವಿತಂಡವಾದಿ ದೃಷ್ಟಿಕೋನಗಳು ಕನ್ನಡದ ಮಕ್ಕಳ ಕಲಿಕಾ ಸಾಮಥ್ರ್ಯವನ್ನು ಮೊಟಕುಗೊಳಿಸುತ್ತವೆ. ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದಾಗ ನಮಗೆ ನಾಡಿನ ಕುರಿತಾದ ಹೆಮ್ಮೆಯ ಭಾವ ಮೂಡಿಸುವಂಥ ಗೀತೆಗಳನ್ನು ಶಿಕ್ಷಕರು ರಾಜ್ಯೋತ್ಸವದ ಸಂದರ್ಭದಲ್ಲಿ ಪರಿಚಯಿಸುತ್ತಿದ್ದರು.
ಕನ್ನಡದ ಕಲಿಕೆಯ ಜೊತೆಜೊತೆಗೇ ಇಂಥ ಪರಿಚಯಾತ್ಮಕ ಪ್ರಯತ್ನಗಳು ನಾಡಿನ ಕುರಿತಾದ ಹೆಮ್ಮೆಯನ್ನೂ ಹೆಚ್ಚಿಸುತ್ತಿದ್ದವು. ‘ಜಯ ಭಾರತ ಜನನಿಯ ತನುಜಾತೆ ಜಯಹೇ ಕರ್ನಾಟಕ ಮಾತೆ’ ಕವಿತೆಯು ನಾಡಗೀತೆಯ ಆಡಳಿತಾತ್ಮಕ ಮನ್ನಣೆ ಪಡೆದು ಕಡ್ಡಾಯ ನಿಯಮಾವಳಿಯ ವ್ಯಾಪ್ತಿಗೆ ಬರುವುದಕ್ಕಿಂತ ಮುಂಚೆಯೇ ಕರ್ನಾಟಕದ ಶಾಲೆಗಳಲ್ಲಿ ಕನ್ನಡದ ವೈವಿಧ್ಯಮಯ ಜಗತ್ತು ಅದರ ಭಾಷಿಕ ಸೊಗಡಿನೊಂದಿಗೇ ಪರಿಚಿತವಾಗುತ್ತಿತ್ತು. ಈಗ ಪ್ರಾಥಮಿಕ ಶಿಕ್ಷಣ ಹಂತದಿಂದಲೇ ಇಂಗ್ಲಿಷ್ ಮಾಧ್ಯಮದ ಆವರಣದ ಕೂಪಕ್ಕೆ ಮಕ್ಕಳನ್ನು ತಳ್ಳುವ ಪ್ರಯೋಗಾರ್ಥ ಪ್ರಯತ್ನದ ಹೆಜ್ಜೆಗಳು ಅಂಥ ವಾತಾವರಣವನ್ನು ಇಲ್ಲವಾಗಿಸುವ ಆತಂಕವನ್ನು ಮೂಡಿಸಿವೆ. ಮಕ್ಕಳ ಭಾಷಿಕ ಸಾಮಥ್ರ್ಯಕ್ಕೆ ಕೊಡಲಿಪೆಟ್ಟು ನೀಡುವ ಸುಳಿವು ನೀಡಿವೆ.
ಕಂಬಾರರ ಮೌಲಿಕ ಚಿಂತನೆ
ಸಮ್ಮೇಳನದ ಅಧ್ಯಕ್ಷರಾದ ಡಾ.ಚಂದ್ರಶೇಖರ ಕಂಬಾರ ಅವರ ನುಡಿಗಳಲ್ಲಿಯೇ ಆಡಳಿತವು ಕನ್ನಡ ಭಾಷೆಯ ಕುರಿತು ಯಾವ ನಿಲುವುಗಳನ್ನು ತಳೆಯಬೇಕು ಎಂಬ ಸ್ಪಷ್ಟ ಮಾರ್ಗದರ್ಶನವಿದೆ.“ಮಾತೃಭಾಷೆಯು ಬದುಕನ್ನು ಅಥಪೂರ್ಣಗೊಳಿಸುತ್ತದೆ. ಸಾಂಸ್ಕøತಿಕ ನಂಬಿಕೆ ಮತ್ತು ಮೌಲ್ಯಗಳು ಮಾತೃಭಾಷೆಯೊಂದಿಗೆ ತಳುಕುಹಾಕಿಕೊಂಡಿರುತ್ತವೆ. ಕನ್ನಡವನ್ನು ಸರಿಯಾಗಿ ಕಲಿಯುವುದರಿಂದ ಇಂಗ್ಲಿಷ್ ಸೇರಿದಂತೆ ಉಳಿದ ಭಾಷೆಗಳನ್ನು ಕಲಿಯುವುದಕ್ಕೂ ಸಹಾಯಕವಾಗುತ್ತದೆ” ಎಂಬ ಅವರ ನಿಲುವುಗಳು ಕೇವಲ ತಾತ್ವಿಕ ಚೌಕಟ್ಟನ್ನಷ್ಟೇ ಹೊಂದಿಲ್ಲ. ಸಮಸ್ತ ಕನ್ನಡಿಗರ ಅನುಭವಕ್ಕೆ ಬಂದ ಮೌಲಿಕ ಅಂಶಗಳನ್ನಾಗಿಯೂ ನಾವು ಅವುಗಳನ್ನು ಗ್ರಹಿಸಬೇಕು.
ಈ ರೀತಿಯಾಗಿ ಗ್ರಹಿಸುವ ಸಂಯಮ ಆಡಳಿತಾತ್ಮಕ ವಲಯದಿಂದ ವ್ಯಕ್ತವಾದರೆ ಕನ್ನಡ ಭಾಷೆಯು ಭವಿಷ್ಯದಲ್ಲಿ ಆತಂಕ ಎದುರಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ವಾಣಿಜ್ಯಿಕ ಹಿತಾಸಕ್ತಿಯ ಪ್ರಲೋಭನೆಗೆ ಒಳಗಾಗಿ ಭಾಷೆಗೆ ಸಂಬಂಧಿಸಿದಂತೆ ಅತಾರ್ಕಿಕವಾದ, ಪ್ರಾಯೋಗಿಕವಲ್ಲದ ತೀರ್ಮಾನಗಳು ಪ್ರಕಟವಾಗುವುದಿಲ್ಲ.
ಇಂಗ್ಲಿಷ್ ಗುಂಗಿನ ಕೃತಕತೆ
ಇಂಗ್ಲಿಷ್ ಪ್ರತಿಷ್ಠೆಯನ್ನು ಹೆಚ್ಚಿಸಿಕೊಳ್ಳುವ ಭಾಷೆಯಾಗಿ ನಮ್ಮೊಳಗೆ ಬೆರೆತುಹೋಗಬೇಕಿಲ್ಲ. ಆ ಭಾಷೆಯನ್ನು ಬಲವಂತವಾಗಿ ಪ್ರಾಥಮಿಕ ಹಂತದಿಂದಲೇ ಮಕ್ಕಳೊಳಗೆ ಬೆರೆಸುವ ಪ್ರಯತ್ನವು ಅವರ ಬೆಳವಣಿಗೆಯ ಸಹಜತೆಗೆ ಕಡಿವಾಣ ಬಿಗಿಯುತ್ತದೆ. ಆ ಸಹಜತೆಯ ಜಾಗವನ್ನು ಕೃತಕತೆ ಆವರಿಸಿಕೊಂಡುಬಿಡುತ್ತದೆ.
ಇಂಗ್ಲಿಷ್ ಗುಂಗಿನ ಕೃತಕ ಚೌಕಟ್ಟಿನೊಳಗೆ ಬಂಧಿಯಾಗಿ ಕನ್ನಡದ ಬಗ್ಗೆ ಕೀಳರಿಮೆ ರೂಪುಗೊಳ್ಳುತ್ತದೆ. ಇಂಗ್ಲಿಷ್ ಶ್ರೇಷ್ಠ ಎಂಬ ತಪ್ಪುಕಲ್ಪನೆಯನ್ನೇ ಮಕ್ಕಳು ಪರಮ ಆದರ್ಶವನ್ನಾಗಿ ಸ್ವೀಕರಿಸುತ್ತಾರೆ. ಹಾಗಾದಾಗ ಮಾತೃಭಾಷೆ, ಅದರೊಂದಿಗಿನ ಕರಳುಬಳ್ಳಿಯ ಸಂಬಂಧ, ಸಂಸ್ಕøತಿಯ ವೈವಿಧ್ಯಮಯ ಸ್ವರೂಪ ಅವರಿಂದ ಕ್ರಮೇಣ ದೂರವಾಗುತ್ತಾ ಹೋಗುತ್ತದೆ. ಅವರನ್ನು ಹೀಗೆ ಉದ್ದೇಶಪೂರ್ವಕವಾಗಿ ಕನ್ನಡದ್ದೇ ಪರಂಪರೆಯ ಬೇರುಗಳಿಂದ ಬೇರ್ಪಡಿಸುವಂಥ ಹೆಜ್ಜೆಗಳು ಭಾಷಿಕ ಸಂದಿಗ್ಧತೆಯನ್ನೇ ಸೃಷ್ಟಿಸುತ್ತವೆ.
ಕರುಳುಬಳ್ಳಿಯ ಸಂಬಂಧ
ಮಕ್ಕಳು ಕನ್ನಡದೊಂದಿಗಿನ ಕರುಳುಬಳ್ಳಿಯ ಸಂಬಂಧ ಕಡಿದುಕೊಂಡರೆ ಏನಾಗುತ್ತದೆ? ಬೆಳೆದು ದೊಡ್ಡವರಾದಾಗ ಕನ್ನಡದ ಭಾಷಿಕ ಸೊಗಡನ್ನೇ ವ್ಯಂಗ್ಯಕ್ಕೀಡುಮಾಡುತ್ತಾರೆ. ಕನ್ನಡದ ಉಳಿವಿನ ಕುರಿತು ಜನಪ್ರಿಯ ಶೈಲಿಯಲ್ಲಿ ಸಿನಿಮಾ ಹೀರೋಗಳು ಹೇಳುವ ಡೈಲಾಗ್ಗಳನ್ನಷ್ಟೇ ಕೇಳಿ ಚಪ್ಪಾಳೆ ಹೊಡೆದು ಆ ಕ್ಷಣಕ್ಕೇ ಮರೆತುಬಿಡುವ ಮನಃಸ್ಥಿತಿಗೆ ಪಕ್ಕಾಗಿಬಿಡುತ್ತಾರೆ. ಇಂಗ್ಲಿಷ್ ಮಾತನಾಡಿದರಷ್ಟೇ ಮರ್ಯಾದೆ ಎಂದುಕೊಂಡು ಪ್ರತಿಷ್ಠೆ ಮೆರೆಯುವ ಕೃತಕತೆಯನ್ನೇ ಗುಣಸ್ವಭಾವವನ್ನಾಗಿಸಿಕೊಳ್ಳುತ್ತಾರೆ.
ಕನ್ನಡದಲ್ಲೇ ಲಭ್ಯವಾಗುವ ಅದೆಷ್ಟೋ ಜ್ಞಾನ ಮಾದರಿಗಳ ಸಂಪರ್ಕದಿಂದ ದೂರವೇ ಉಳಿದುಬಿಡುತ್ತಾರೆ. ಎಲ್ಲದಕ್ಕೂ ಇಂಗ್ಲಿಷ್ನ್ನೇ ನೆಚ್ಚಿಕೊಂಡು ಅದರ ಮೂಲಕ ಹರಿದುಬರುವ ಮಾಹಿತಿಗಳನ್ನು ಮೇಲ್ನೋಟಕ್ಕಷ್ಟೇ ಗ್ರಹಿಸುವ ಅವಸರದ ಮಾದರಿಯನ್ನೇ ಅನುಸರಿಸುತ್ತಾರೆ. ವಿವಿಧ ಭಾಷೆಗಳಲ್ಲಿ ಲಭ್ಯವಾಗುವ ಮಾಹಿತಿಗಳನ್ನುಜ್ಞಾನಸಂಪನ್ಮೂಲವಾಗಿಸಿಕೊಳ್ಳುವ ಸಂಯಮ ರೂಢಿಸಿದ ಕನ್ನಡ ಓದಿನ ಸೊಗಡು ಸವಿಯುವ ಅಪೂರ್ವ ಅವಕಾಶದಿಂದ ಅವರು ವಂಚಿತರಾಗುತ್ತಾರೆ.ಮುಂದೆ ಎದುರಾಗಲಿರುವ ಅಂಥದ್ದೊಂದು ಸನ್ನಿವೇಶದಿಂದ ಕನ್ನಡದ ಮಕ್ಕಳನ್ನು ಪಾರುಮಾಡಬೇಕಿದೆ. ಸಮ್ಮೇಳನದ ನಿರ್ಣಯಗಳನ್ನು ಗಂಭೀರವಾಗಿ ಪರಿಗಣಿಸಿ ಕನ್ನಡಕ್ಕಿರುವ ಉಜ್ವಲ ಭವಿಷ್ಯವನ್ನು ವಿಸ್ತರಿಸುವ ನಿಟ್ಟಿನಲ್ಲಿ ಯೋಚಿಸಬೇಕಾಗಿದೆ. ಭಾಷೆಗೆ ಸಂಬಂಧಿಸಿದಂತೆ ಕವಲು ಹಾದಿ ತುಳಿಯುವ ರಾಜಕಾರಣದ ಸಂಕುಚಿತ ವ್ಯಾಕರಣವನ್ನುಭಗ್ನಗೊಳಿಸಬೇಕಿದೆ.
-ಡಾ.ಎನ್.ಕೆ.ಪದ್ಮನಾಭ

ದಿನದ ಸುದ್ದಿ
ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.
ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.
ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.
ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.
“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.
ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.
ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.
ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ
ಸುದ್ದಿದಿನ,ದಾವಣಗೆರೆ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್. ಬಸವಂತಪ್ಪ ಅವರಿಗೆ ಸಚಿವ ಸ್ಥಾನ ದೊರೆತಿರುವುದು ದಾವಣಗೆರೆ ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಣಮಿಸಿದೆ. ಹಲವು ವರ್ಷಗಳಿಂದ ಪಕ್ಷದ ಸಂಘಟನೆಗೆ ಸಲ್ಲಿಸಿರುವ ಸೇವೆ, ಕ್ಷೇತ್ರದ ಅಭಿವೃದ್ಧಿಗೆ ನೀಡಿರುವ ಆದ್ಯತೆ ಹಾಗೂ ಜನಸಾಮಾನ್ಯರೊಂದಿಗೆ ಹೊಂದಿರುವ ನಿಕಟ ಸಂಪರ್ಕವನ್ನು ಪರಿಗಣಿಸಿ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಸಚಿವರಾಗಿ ಆಯ್ಕೆಯಾದ ಸುದ್ದಿ ಪ್ರಕಟವಾಗುತ್ತಿದ್ದಂತೆಯೇ ಮಾಯಕೊಂಡ ಕ್ಷೇತ್ರ ಸೇರಿದಂತೆ ದಾವಣಗೆರೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಭ್ರಮ ಮನೆಮಾಡಿತು. ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂತಸ ವ್ಯಕ್ತಪಡಿಸಿದರು. ಬಸವಂತಪ್ಪ ಅವರ ನಿವಾಸದ ಎದುರು ಬೆಳಗ್ಗಿನಿಂದಲೇ ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳು ಜಮಾಯಿಸಿ ಅಭಿನಂದನೆ ಸಲ್ಲಿಸಿದರು. ಮಹಿಳೆಯರು ಆರತಿ ಬೆಳಗಿ ಸ್ವಾಗತ ಕೋರಿದರೆ, ಯುವಕರು ಘೋಷಣೆಗಳನ್ನು ಕೂಗಿ ಸಂಭ್ರಮಾಚರಣೆ ನಡೆಸಿದರು.
ಕೆ.ಎಸ್. ಬಸವಂತಪ್ಪ ಅವರು ಹಲವು ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದು, ರೈತರ ಸಮಸ್ಯೆಗಳು, ಕುಡಿಯುವ ನೀರಿನ ಯೋಜನೆಗಳು, ಗ್ರಾಮೀಣ ರಸ್ತೆ ಅಭಿವೃದ್ಧಿ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಿಗೆ ವಿಶೇಷ ಆದ್ಯತೆ ನೀಡುವ ಮೂಲಕ ಜನರ ವಿಶ್ವಾಸ ಗಳಿಸಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಿರುವ ಕಾರಣದಿಂದಲೇ ಅವರಿಗೆ ಸಚಿವ ಸ್ಥಾನ ದೊರೆತಿದೆ ಎಂಬ ಅಭಿಪ್ರಾಯವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.
ಮಾಯಕೊಂಡ ಕ್ಷೇತ್ರವು ಕೃಷಿ ಪ್ರಧಾನ ಪ್ರದೇಶವಾಗಿದ್ದು, ಇಲ್ಲಿ ನೀರಾವರಿ, ರಸ್ತೆ, ಶಿಕ್ಷಣ, ಕೈಗಾರಿಕಾ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಯಂತಹ ಹಲವು ಸವಾಲುಗಳಿವೆ. ಸಚಿವ ಸ್ಥಾನ ದೊರೆತಿರುವ ಹಿನ್ನೆಲೆಯಲ್ಲಿ ಈ ಸಮಸ್ಯೆಗಳ ಪರಿಹಾರಕ್ಕೆ ಹೆಚ್ಚಿನ ವೇಗ ಸಿಗಲಿದೆ ಎಂಬ ನಿರೀಕ್ಷೆ ಜನರಲ್ಲಿ ಮೂಡಿದೆ. ವಿಶೇಷವಾಗಿ ರೈತರು, ಯುವಕರು ಹಾಗೂ ಮಹಿಳಾ ಸಂಘಟನೆಗಳು ಹೊಸ ಸಚಿವರಿಂದ ಹೆಚ್ಚಿನ ಅಭಿವೃದ್ಧಿ ಯೋಜನೆಗಳನ್ನು ನಿರೀಕ್ಷಿಸುತ್ತಿವೆ.
ಸಚಿವ ಸ್ಥಾನ ಘೋಷಣೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೆ.ಎಸ್. ಬಸವಂತಪ್ಪ ಅವರು, “ಈ ಜವಾಬ್ದಾರಿ ನನಗೆ ದೊರೆತಿರುವುದು ವೈಯಕ್ತಿಕ ಗೌರವ ಮಾತ್ರವಲ್ಲ, ಮಾಯಕೊಂಡ ಕ್ಷೇತ್ರದ ಪ್ರತಿಯೊಬ್ಬ ಮತದಾರನಿಗೂ ಸಂದ ಗೌರವವಾಗಿದೆ. ಮುಖ್ಯಮಂತ್ರಿ ಹಾಗೂ ಪಕ್ಷದ ಹಿರಿಯ ನಾಯಕರು ನನ್ನ ಮೇಲೆ ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ಜನರ ನಿರೀಕ್ಷೆಗಳನ್ನು ಈಡೇರಿಸುವುದು ನನ್ನ ಮೊದಲ ಆದ್ಯತೆಯಾಗಿರುತ್ತದೆ” ಎಂದು ಹೇಳಿದರು.
ರಾಜ್ಯದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದರ ಜೊತೆಗೆ, ದಾವಣಗೆರೆ ಜಿಲ್ಲೆಗೆ ಹೆಚ್ಚಿನ ಅಭಿವೃದ್ಧಿ ಯೋಜನೆಗಳನ್ನು ತರಲು ಪ್ರಯತ್ನಿಸಲಾಗುವುದು ಎಂದು ಅವರು ಭರವಸೆ ನೀಡಿದರು. ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ, ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ, ಶಾಲೆಗಳು ಮತ್ತು ಆಸ್ಪತ್ರೆಗಳ ಸೌಲಭ್ಯಗಳ ಸುಧಾರಣೆ, ಯುವಕರಿಗೆ ಉದ್ಯೋಗಾವಕಾಶಗಳ ಸೃಷ್ಟಿ ಹಾಗೂ ಮಹಿಳಾ ಸಬಲೀಕರಣ ಕಾರ್ಯಕ್ರಮಗಳಿಗೆ ವಿಶೇಷ ಗಮನ ಹರಿಸಲಾಗುವುದು ಎಂದು ತಿಳಿಸಿದರು.
ಪಕ್ಷದ ಜಿಲ್ಲಾ ಮುಖಂಡರು ಮಾತನಾಡಿ, ಬಸವಂತಪ್ಪ ಅವರ ಸಚಿವ ಸ್ಥಾನದಿಂದ ಜಿಲ್ಲೆಗೆ ಹೆಚ್ಚಿನ ಅನುದಾನ ಮತ್ತು ಅಭಿವೃದ್ಧಿ ಯೋಜನೆಗಳು ಹರಿದು ಬರಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಆಡಳಿತಾತ್ಮಕ ಮಟ್ಟದಲ್ಲಿ ಜಿಲ್ಲೆಯ ವಿವಿಧ ಯೋಜನೆಗಳಿಗೆ ವೇಗ ಸಿಗಲಿದ್ದು, ಬಾಕಿ ಉಳಿದಿರುವ ಹಲವು ಕಾಮಗಾರಿಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದರು.
ವಿವಿಧ ಸಂಘಟನೆಗಳ ಪ್ರತಿನಿಧಿಗಳು ಸಹ ಸಚಿವರಿಗೆ ಅಭಿನಂದನೆ ಸಲ್ಲಿಸಿ, ಜಿಲ್ಲೆಯ ಬಹುಕಾಲದ ಬೇಡಿಕೆಗಳಾದ ನೀರಾವರಿ ಯೋಜನೆಗಳ ವಿಸ್ತರಣೆ, ಕೈಗಾರಿಕಾ ಹೂಡಿಕೆ, ಸರ್ಕಾರಿ ಆಸ್ಪತ್ರೆಗಳ ಉನ್ನತೀಕರಣ, ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಗ್ರಾಮೀಣ ರಸ್ತೆ ಸುಧಾರಣೆಗೆ ಆದ್ಯತೆ ನೀಡುವಂತೆ ಮನವಿ ಮಾಡಿದರು.
ಸಾಮಾಜಿಕ ಜಾಲತಾಣಗಳಲ್ಲಿಯೂ ಬಸವಂತಪ್ಪ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿತು. ಸಾರ್ವಜನಿಕರು, ರಾಜಕೀಯ ಮುಖಂಡರು, ವಿವಿಧ ಸಂಘಟನೆಗಳು ಹಾಗೂ ಅಭಿಮಾನಿಗಳು ಶುಭಾಶಯಗಳನ್ನು ತಿಳಿಸಿ, ಸಚಿವರ ಹೊಸ ಜವಾಬ್ದಾರಿ ಯಶಸ್ವಿಯಾಗಲಿ ಎಂದು ಹಾರೈಸಿದರು.
ರಾಜಕೀಯ ವಿಶ್ಲೇಷಕರ ಅಭಿಪ್ರಾಯದಂತೆ, ರಾಜ್ಯ ಸಚಿವ ಸಂಪುಟದಲ್ಲಿ ಮಾಯಕೊಂಡ ಕ್ಷೇತ್ರಕ್ಕೆ ದೊರೆತಿರುವ ಈ ಪ್ರತಿನಿಧಿತ್ವವು ದಾವಣಗೆರೆ ಜಿಲ್ಲೆಯ ರಾಜಕೀಯ ಮಹತ್ವವನ್ನು ಮತ್ತಷ್ಟು ಹೆಚ್ಚಿಸಿದೆ. ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುವ ಜೊತೆಗೆ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಸಚಿವರ ಪಾತ್ರ ಮಹತ್ವದ್ದಾಗಿರಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಮಾಯಕೊಂಡ ಕ್ಷೇತ್ರದ ಜನರು ಸಚಿವ ಸ್ಥಾನವನ್ನು ಕೇವಲ ರಾಜಕೀಯ ಸಾಧನೆಯಾಗಿ ನೋಡದೇ, ಅಭಿವೃದ್ಧಿಯ ಹೊಸ ಅಧ್ಯಾಯದ ಆರಂಭವಾಗಿ ಪರಿಗಣಿಸುತ್ತಿದ್ದಾರೆ. ಕುಡಿಯುವ ನೀರು, ರಸ್ತೆ, ಕೃಷಿ, ಶಿಕ್ಷಣ, ಆರೋಗ್ಯ ಹಾಗೂ ಕೈಗಾರಿಕಾ ಕ್ಷೇತ್ರಗಳಲ್ಲಿ ಗಮನಾರ್ಹ ಬದಲಾವಣೆಗಳು ಆಗಲಿವೆ ಎಂಬ ಆಶಾಭಾವನೆ ವ್ಯಕ್ತವಾಗಿದೆ.
ಕೆ.ಎಸ್. ಬಸವಂತಪ್ಪ ಅವರ ಸಚಿವ ಸ್ಥಾನವು ಮಾಯಕೊಂಡ ಕ್ಷೇತ್ರ ಹಾಗೂ ದಾವಣಗೆರೆ ಜಿಲ್ಲೆಗೆ ಹೊಸ ಅವಕಾಶಗಳನ್ನು ತೆರೆದಿದೆ. ಜನರ ವಿಶ್ವಾಸಕ್ಕೆ ತಕ್ಕಂತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಸರ್ಕಾರ ಮತ್ತು ಜನರ ನಡುವೆ ಪರಿಣಾಮಕಾರಿ ಸೇತುವೆಯಾಗಿ ಕಾರ್ಯನಿರ್ವಹಿಸುವ ನಿರೀಕ್ಷೆ ಎಲ್ಲ ವಲಯಗಳಲ್ಲೂ ವ್ಯಕ್ತವಾಗಿದೆ. ಮುಂದಿನ ದಿನಗಳಲ್ಲಿ ಅವರ ಆಡಳಿತಾತ್ಮಕ ನಿರ್ಧಾರಗಳು ಹಾಗೂ ಅಭಿವೃದ್ಧಿ ಯೋಜನೆಗಳ ಅನುಷ್ಠಾನ ಜಿಲ್ಲೆಯ ಭವಿಷ್ಯದ ದಿಕ್ಕನ್ನು ನಿರ್ಧರಿಸಲಿವೆ ಎಂಬ ಅಭಿಪ್ರಾಯ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಗೆ ದೂರು
ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7 ಕೋಟಿ ಅನುದಾನದಲ್ಲಿನ ಅವ್ಯವಹಾರವನ್ನು ತನಿಖೆಗೆ ಒಳಪಡಿಸುವಂತೆ ಲೋಕಾಯುಕ್ತಾಗೆ ದೂರು ನೀಡಲಾಗಿದೆ ಎಂದು ವಕೀಲ ಕೆ.ಎ.ಓಬಳಪ್ಪ ಅವರು ತಿಳಿಸಿದರು.
ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಕಛೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇಲ್ಲಿಗೆ 2023-24ನೇ ಸಾಲಿನಲ್ಲಿ ಉಂಟಾದ ಮಳೆಯ ಅಭಾವ ಮತ್ತು ಬರದ ಕಾರಣದಿಂದ ಒಟ್ಟು 4 ಹಂತದಲ್ಲಿ 7 ಕೋಟಿ ರೂಪಾಯಿಗಳನ್ನು ಚಿತ್ರದುರ್ಗ ಜಿಲ್ಲೆಯ 06 ತಾಲ್ಲೂಕುಗಳಿಗೆ ಕುಡಿಯುವ ನೀರಿಗಾಗಿ ಸರ್ಕಾರ ಬಿಡುಗಡೆ ಮಾಡಿರುತ್ತದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ಮಾಹಿತಿ ತಿಳಿದಿದೆ ಎಂದರು.
ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ 06 ತಾಲ್ಲೂಕುಗಳ ಉಪವಿಭಾಗಗಳಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ ಮಾಹಿತಿ ಕೋರಿದಾಗ, ಯಾವುದೇ ಉಪವಿಭಾಗಗಳ ಅಧಿಕಾರಿಗಳು ಸೂಕ್ತ ಮಾಹಿತಿ ನೀಡದ ಕಾರಣ ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ ಅರ್ಜಿ ಸಲ್ಲಿಸಿ, ‘2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಳ್ಳಕೆರೆ, ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು, ಮೊಳಕಾಲ್ಮೂರು ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ’ ದೂರು ನೀಡಲಾಗಿತ್ತು ಎಂದರು.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ನಮ್ಮ ದೂರು ಅರ್ಜಿಯನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿ, ಸೂಕ್ತ ಕ್ರಮವಹಿಸಿ ಕಛೇರಿಗೆ ವರದಿ ಸಲ್ಲಿಸಲು ಸೂಚಿಸಿರುತ್ತಾರೆ. ಅದರಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರು ವಿಚಾರಣೆ ನಡೆಸಿ, ಅರ್ಜಿದಾರರಿಗೆ ಕಡತ ವೀಕ್ಷಣೆ ಮಾಡಲು ಅವಕಾಶ ನೀಡಿ, ದಾಖಲೆ ನೀಡುವಂತೆ ಆದೇಶ ಹೊರಡಿಸಿರುತ್ತಾರೆ ಎಂದು ತಿಳಿಸಿದರು.
ಕಾರ್ಯಪಾಲಕ ಅಭಿಯಂತರರ ಆದೇಶದಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ, ಚಿತ್ರದುರ್ಗ, ಚಳ್ಳಕೆರೆ, ಹೊಳಲ್ಕೆರೆ, ಹೊಸದುರ್ಗ, ಹಿರಿಯೂರು ಇವರುಗಳು ವಿವಿಧ ದಿನಾಂಕಗಳAದು ಉಪವಿಭಾಗಗಳಿಗೆ ಆಹ್ವಾನಿಸಿ, ಕಡತ ಪರಿಶೀಲನೆ ಮಾಡಿಕೊಳ್ಳುವಂತೆ ತಿಳಿಸಿದ ಕಾರಣ ಉಪವಿಭಾಗಗಳ ಕಾರ್ಯಪಾಲಕ ಅಭಿಯಂತರರುಗಳು ನಿಗಧಿಪಡಿಸಿದ ದಿನಾಂಕದಂದು ಉಪವಿಭಾಗಗಳ ಕಛೇರಿಗೆ ಭೇಟಿ ನೀಡಿದಾಗ ಕಂಡುಬಂದ ಅಂಶಗಳೆಂದರೆ;
1. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಿತ್ರದುರ್ಗ ಇಲ್ಲಿ ಒಟ್ಟು 80 ಕಾಮಗಾರಿಗಳು ನಡೆದಿದ್ದು, ಇದರಲ್ಲಿ ಕೇವಲ 23 ಕಾಮಗಾರಿಗಳ (ಅಂದಾಜು ಮೊತ್ತ ರೂ. 37.88 ಲಕ್ಷ) ಕಡತಗಳನ್ನು ತೋರಿಸಿದ್ದು, ಉಳಿದ ಕಾಮಗಾರಿಯ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಕಡತ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.
2. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಳ್ಳಕೆರೆ ಇಲ್ಲಿ ಒಟ್ಟು 80 ಕಾಮಗಾರಿಗಳ ಕಡತಗಳಲ್ಲಿ 28 ಕಾಮಗಾರಿಗಳ ಕಡತಗಳನ್ನು ತೋರಿಸಿದ್ದು, ಉಳಿದ 52 ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.
3. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ, ಇಲ್ಲಿಗೆ ಭೇಟಿ ನೀಡಿದ ಸಮಯದಲ್ಲಿ ಈ ಕಛೇರಿಗಳಲ್ಲಿ ಯಾವುದೇ ಕಡತಗಳು ಲಭ್ಯವಿರುವುದಿಲ್ಲ. ಕಛೇರಿಯ ಸಿಬ್ಬಂದಿಗಳು ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬುದಾಗಿ ದೃಢೀಕರಣ ನೀಡಿರುತ್ತಾರೆ ಎಂದು ತಿಳಿಸಿದರು.
ಕಡತ ಪರಿಶೀಲನೆಯ ತರುವಾಯ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ದೂರು ನೀಡಿ, ನಾವು ಕೋರಿದ ಅಗತ್ಯ ದಾಖಲೆಗಳನ್ನು ಒದಗಿಸಿಕೊಡುವಂತೆ ಕೋರಲಾಗಿತ್ತು. ಆದರೆ ಕಾರ್ಯಪಾಲಕ ಅಭಿಯಂತರರು ಇವರು ಮಾಹಿತಿ ಕೊಡಿಸುವಲ್ಲಿ ಮತ್ತು ತನಿಖಾ ವರದಿ ನೀಡುವಲ್ಲಿ ವಿಫಲರಾಗಿದ್ದಾರೆ. ಈ ಬಗ್ಗೆ ಹಾಲಿ ಕಾರ್ಯಪಾಲಕ ಅಭಿಯಂತರರಾದ ಅಮರ್ನಾಥ್ ಜೈನ್ ಅವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಾಗಿರುತ್ತದೆ ಎಂದರು.
ಈ ಎಲ್ಲಾ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ 6 ಉಪವಿಭಾಗಗಳಲ್ಲಿ ಕಾರ್ಯನಿರ್ವಹಿಸಿರುವ 23 ಸಹಾಯಕ ಕಾರ್ಯಪಾಲಕ ಅಭಿಯಂತರರು, 13 ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಿರಿಯ ಅಭಿಯಂತರರು, ಅಂದಿನ ಕಾರ್ಯಪಾಲಕ ಅಭಿಯಂತರರಾದ ಬಸವನಗೌಡ ಪಾಟೀಲ್ ಹಾಗೂ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಸೋಮಶೇಖರ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಟಿಯಲ್ಲಿ ಹಿರಿಯ ವಕೀಲರಾದ ನಾಗರಾಜ ಪೂಜಾರ್, ಪತ್ರಕರ್ತ ಅಶೋಕ್, ಹನುಮಂತಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ
-
ಅಂತರಂಗ12 hours agoಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
-
ದಿನದ ಸುದ್ದಿ2 days agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ
-
ದಿನದ ಸುದ್ದಿ1 day agoನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್


