Connect with us

ನೆಲದನಿ

ನುಡಿಯ ಒಡಲು -04 | ಭಾಷಾ ವೈವಿಧ್ಯತೆಯನ್ನು ಕಾಪಾಡುವುದೆಂದರೇನು?

Published

on

Art : Sunny LA
  • ಮೇಟಿ ಮಲ್ಲಿಕಾರ್ಜುನ, ಸಹ ಪ್ರಾಧ್ಯಾಪಕರು, ಭಾಷಾಶಾಸ್ತ್ರ ವಿಭಾಗ, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ಭಾಗ -02

ಭಾಷೆಯನ್ನು ಮನುಷ್ಯನ ಅಂತಸ್ಥ ಸ್ವಭಾವದ ಅಭಿವ್ಯಕ್ತಿಯನ್ನಾಗಿ ನೋಡುವ ತಾತ್ವಿಕತೆ ಇವತ್ತು ಪ್ರಬಲವಾಗಿದೆ. ಇದು ಭಾಷೆಯ ಗುಣವನ್ನು ಹೇಳುತ್ತದೆ ಹೊರತು ಯಾವುದೇ ನಿರ್ದಿಷ್ಟ ಭಾಷೆಗೆ ಮಾತ್ರ ಇದನ್ನು ಅನ್ವಯಿಸಿ ಹೇಳಿಲ್ಲ. ಎಲ್ಲ ಮಾನವ ಸಹಜ ಭಾಷೆಗಳು ವೈಶ್ವಿಕ ವ್ಯಾಕರಣವನ್ನೇ (ಯುನಿವರ್ಸಲ್ ಗ್ರ್ಯಾಮರ್) ನೆಲೆಯಾಗಿಸಿಕೊಂಡಿರುತ್ತವೆ. ಈ ಸಾಮಾನ್ಯ ಗ್ರಹಿಕೆಯನ್ನು ಭಾಷಿಕ ಪರಿಕಲ್ಪನೆಗಳು ಮತ್ತು ಭಾಷೆಯ ರಾಚನಿಕ ಸಂಕೀರ್ಣತೆಯ ಪ್ರಮಾಣವನ್ನಾಗಿ ನೋಡಲಾಗುತ್ತದೆ.

ಹಾಗಾದರೆ, ಭಾಷೆಯ ತಳಹದಿಯೇ ವಿಶ್ವಾತ್ಮಕತೆಯಾದರೆ, ಚಿಂತನೆಯ ತಳಹದಿಯೂ ವಿಶ್ವಾತ್ಮಕವೇ? ಎಂಬ ಸಹಜ ಪ್ರಶ್ನೆಯೊಂದು ಇಲ್ಲಿ ಎದುರಾಗುತ್ತದೆ. ಏಕೆಂದರೆ, ನಮ್ಮ ಚಿಂತನಾಧಾರೆಯನ್ನು ನಮ್ಮ ತಾಯ್ನುಡಿ ರೂಪಿಸುತ್ತದೆ ಎಂದು ಬಲವಾಗಿ ವಾದಿಸಲಾಗಿದೆ. ‘ಮನುಷ್ಯರೆಲ್ಲರೂ ಒಂದೇ ಬಗೆಯಲ್ಲಿ ಯೋಚಿಸಬಲ್ಲರು’ ಎನ್ನುವ ತಾತ್ವಿಕ ಅಭಿಪ್ರಾಯಕ್ಕೆ ವಿರುದ್ಧವಾದ ನಂಬಿಕೆ ಇದಾಗಿದೆ. ಇದಕ್ಕೆ ಕಾರಣವೇನೆಂದರೆ ಸಾಂಸ್ಕ್ರುತಿಕ ವ್ಯತ್ಯಾಸಗಳು ಅತ್ಯಂತ ಆಳವಾಗಿ ಭಾಷೆಯೊಳಗೆ ನೆಲೆಗೊಂಡಿರುತ್ತವೆ ಎನ್ನುವುದಾಗಿದೆ. ಈ ದೇಶಿ ರಾಜಕಾರಣವನ್ನು ನಮ್ಮ ಇಡೀ ಭಾಷಿಕ ಪರಿಸರದೊಳಗೆ ಹೇಗೆ ಒಂದು ಮಾರ್ಗಸೂಚಿಯನ್ನಾಗಿ ಅಳವಡಿಸಲಾಗುತ್ತದೇ? ಎನ್ನುವುದೇ ಈ ವಾದದ ಹಿಂದಿನ ಸವಾಲು.

ಲೋಕವನ್ನು ಅರಿಯುವ, ಗ್ರಹಿಸುವ ಹಾಗೂ ಲೋಕದ ಕುರಿತು ಚಿಂತಿಸುವ ಬಗೆಗಳ ಮೇಲೆ ಭಾಷೆ ತನ್ನ ಪ್ರಭಾವವನ್ನು ಬೀರುತ್ತದೆ ಎನ್ನುವ ವಾದವನ್ನೂ ಇದು ಬಲಪಡಿಸುತ್ತದೆ. ಈ ಮೂಲಕ ಭಾಷೆ, ಸಂಸ್ಕ್ರುತಿ ಮತ್ತು ಚಿಂತನೆಗಳ ನಡುವೆ ಮಹತ್ವದ ನಂಟಸ್ತಿಕೆಯನ್ನು ಏರ್ಪಡಿಸಲಾಗಿದೆ. ಏಕೆಂದರೆ ಸಂಸ್ಕ್ರುತಿ ಪ್ರತಿದಿನದ ಬದುಕು ಎಂದಾದರೆ, ಭಾಷೆ ಪ್ರತಿದಿನದ ಮಾತು ಆಗಿರುತ್ತದೆ.

ಹಾಗಾಗಿ ಒಂದನ್ನೊಂದು ಪರಸ್ಪರ ಪ್ರಭಾವಿಸುವ ವಿನ್ಯಾಸವೊಂದು ರೂಪುಗೊಳ್ಳುತ್ತದೆ. ಆದರೆ ಸಾಂಸ್ಕ್ರುತಿಕ ಪ್ರಭಾವಗಳು ಅತ್ಯಂತ ಗಾಢವಾಗಿ ಎದ್ದು ಕಾಣುವುದು ಸಂಗೀತ ಅಭಿರುಚಿ, ಲೈಂಗಿಕತೆಯ ಬಗೆಗಿನ ಸಂವೇದನೆಗಳು ( ಮೋರ್ಸ್), ಉಡಿಗೆ ತೊಡಿಗೆಯ ವಿನ್ಯಾಸಗಳು ಎಂಬಿತ್ಯಾದಿ ಹೊರಮೈ ವಿನ್ಯಾಸಗಳಲ್ಲಿ ಮಾತ್ರ ನೋಡಲಾಗುತ್ತದೆ. ನುಡಿಯನ್ನೂ ಈ ವಿನ್ಯಾಸಗಳಲ್ಲಿ ಒಂದನ್ನಾಗಿ ಪರಿಗಣಿಸಬಹುದೇ? ಇಲ್ಲವೇ ನುಡಿಯನ್ನು ಇಡೀ ಸಂಸ್ಕ್ರುತಿಯ ನಿರ್ಮಿತಿಯನ್ನಾಗಿ (ಆರ್ಟಿಫ್ಯಾಕ್ಟ್) ನೋಡಬಹುದೇ? ಅಥವಾ ಇದೊಂದು ನಿಸರ್ಗದತ್ತವಾದ ನೆಲೆಯೇ? ಎಂಬ ಪ್ರಶ್ನೆಗಳೂ ಇಲ್ಲಿ ತಲೆಯೆತ್ತುತ್ತವೆ.

ಏಕೆಂದರೆ ‘ಜನಾಂಗೀಯ ಪ್ರಜ್ಞೆ’ (ಎತ್ನೋಗ್ರಾಫಿಕ್ ಸೆನ್ಸ್)ಯನ್ನು ರೂಪಿಸಲು ನುಡಿ ಮತ್ತು ಸಂಸ್ಕ್ರುತಿಯನ್ನು ಬಳಸಲಾಗುತ್ತದೆ. ಬಹುತೇಕ ಸನ್ನಿವೇಶದಲ್ಲಿ ಹೀಗೆ ಪ್ರಶ್ನಿಸುವ ಬಗೆಯೇ ಅಚ್ಚರಿಯ ಸಂಗತಿಯಾಗಿ ಕಾಣಬಹುದು. ಏಕೆಂದರೆ ಭಾಷೆ ಸಾಂಸ್ಕ್ರುತಿಕ ಆಚರಣೆಯೇ ಹೊರತು ಅದು ಸಾಂಸ್ಕ್ರುತಿಕ ಹುಸಿತನವಲ್ಲ ಎನ್ನುವ ನಂಬಿಕೆ ಬಲವಾಗಿರುತ್ತದೆ. ಇಲ್ಲಿ ಮತ್ತೊಂದು ಮಹತ್ವದ ಸಂಗತಿಯನ್ನು ನೋಡಬಹುದು ಅದೇನೆಂದರೆ, ಒಂದು ವೇಳೆ ಭಾಷೆಯನ್ನು ಮನಸ್ಸಿನ ಬಿಂಬವಾಗಿಯೇ ಪರಿಗಣಿಸಿದರೆ, ಅದರಲ್ಲಿ ನಾವು ಯಾವ ಪ್ರತಿಫಲನವನ್ನು ಕಾಣುತ್ತೇವೆ. ಅಂದರೆ ಮಾನವ ಸ್ವಭಾವವೋ? ಇಲ್ಲವೇ ನಮ್ಮ ಸಮೂಹಗಳ ಸಾಂಸ್ಕ್ರುತಿಕ ಆಚರಣೆಯೋ?

ದಿಟ, ಜಗತ್ತಿನಾದ್ಯಂತ ಭಾಷೆಗಳು ಭಿನ್ನಪ್ರಭೇದಗಳಿಂದ ಕೂಡಿರುತ್ತವೆ. ಹಾಗಂತ ಪ್ರತಿಯೊಂದು ಮಗುವೂ ಆಯಾ ಭಾಷೆಗೆ ಅನುಗುಣವಾದ ಕಸುವನ್ನು ಹೊಂದಿರಲಾರದು. ಪ್ರತೀ ಮಗು ಆಕಸ್ಮತ್ತಾಗಿ ಆಯಾ ಸಮುದಾಯದ ನುಡಿಯನ್ನು ಪಡೆದುಕೊಳ್ಳುತ್ತದೆ/ಕಲಿಯುತ್ತದಯೇ ಹೊರತು ಆಯಾ ನುಡಿ ಸಮುದಾಯದ ವಂಶವಾಹಿನಿಯನ್ನು ಅದು ಹುಟ್ಟಿನಿಂದ ಪಡೆದಿರುವುದಿಲ್ಲ. ಮಗುವಿನಲ್ಲಿ ಜೈವಿಕವಾಗಿ ಅಂತಸ್ಥವಾಗಿರುವುದು ನುಡಿ ಕಸುವು ಮಾತ್ರ. ಅದು ಯಾವುದೇ ನಿರ್ದಿಷ್ಟ ನುಡಿಗೆ ಮಾತ್ರ ಸೀಮಿತವಾದ ವಿದ್ಯಮಾನವಲ್ಲ.

ಹಾಗಾಗಿ ವೈಶ್ವಿಕ ವ್ಯಾಕರಣ ಎನ್ನುವುದು ಸಾರ್ವತ್ರಿಕ ಕಲ್ಪನೆಯಾಗಿದೆ. ಇದಕ್ಕೆ ಪ್ರಾದೇಶಿಕತೆ ಪ್ರಾಪ್ತವಾಗುವುದು ಭಾಷಿಕ ಭಿನ್ನಪ್ರಭೇದಗಳಿಂದ ಮಾತ್ರ. ಭಾಷೆಗಳ ನಡುವಣ ವ್ಯತ್ಯಾಸಗಳು ಎರಡು ನೆಲೆಯಲ್ಲಿ ಏರ್ಪಡುತ್ತವೆ. ಒಂದು ಬಳಕೆಗೆ ಸಂಬಂಧಿಸಿದರೆ, ಮತ್ತೊಂದು ರಚನೆಗೆ ಸಂಬಂಧಿಸಿದ ಬಗೆಯಾಗಿದೆ. ನುಡಿಗಳ ನಡುವಣ ರಾಚನಿಕ ಭಿನ್ನತೆಗಳನ್ನು ವಿಕಲ್ಪಗಳೆಂದು ಮತ್ತು ಬಳಕೆಗೆ ಸಂಬಂಧಿಸಿದ ಸಂಗತಿಗಳು ಸಾಂಸ್ಕ್ರುತಿಕವೂ ಹಾಗೂ ಪ್ರ್ಯಾಗ್ಮಾಟಿಕ್ ಆಯಾಮದಿಂದಲೂ ಕೂಡಿರುತ್ತವೆ.

ಹಾಗಾಗಿ ಪರಿಕಲ್ಪನೆಗಳಿಗೆ ಭಿನ್ನ ಹೆಸರು, ಸೂಚಕಗಳನ್ನು ಆಯಾ ಭಾಷಿಕರು ಆಯ್ಕೆ ಮಾಡಿಕೊಳ್ಳುವ ವಿಧಾನವನ್ನೇ, ನುಡಿಗಳ ನಡುವಣ ಪ್ರಮುಖ ವ್ಯತ್ಯಾಸಗಳನ್ನಾಗಿ ಗುರುತಿಸಲಾಗುತ್ತದೆ. ಈ ಒಂದೊಂದು ಸೂಚಕ ಇಲ್ಲವೇ ಹೆಸರು ಆಯಾ ಸಾಂಸ್ಕ್ರುತಿಕ ಅನಕೂಲತೆಗಳಿಗೆ ಹೊರತಾದ ಯಾವುದೇ ಬಗೆಯ ಕ್ಲೇಮ್ ಈ ಇಡೀ ಭಾಷಿಕ ಪ್ರಕ್ರಿಯೆಯೊಳಗೆ ಇರುವುದಿಲ್ಲ. ಮೇಲಾಗಿ ಈ ಯಾವುದೇ ಸೂಚಕ ಇಲ್ಲವೇ ಹೆಸರು ಆಯಾ ಸಂಸ್ಕ್ರುತಿಯೊಳಗೆಯೇ ನಿಚ್ಚಳವಾಗಿ ರೂಪುಗೊಂಡಿರುತ್ತದೆ ಹೊರತು, ಆಯಾ ವಸ್ತುವಿನ ಸ್ವರೂಪ/ಸ್ವಭಾವವನ್ನು ಯಥೇಚ್ಛವಾಗಿ ಸೂಚಿಸುವುದಿಲ್ಲ. ವಸ್ತುಗಳು ದಿಟದಲ್ಲಿ ಒಂದೇ ಬಗೆಯಲ್ಲಿರುತ್ತವೆ. ಕೊನೆಪಕ್ಷ, ಆಯಾ ವಾಸ್ತವದ ಗ್ರಹಿಕೆಯಲ್ಲಾದರೂ ಒಂದೇ ಬಗೆಯಲ್ಲಿರುತ್ತವೆ.

ಪ್ರತಿಯೊಂದು ಸಂಸ್ಕ್ರುತಿಯು ತಾನು ಬಯಸಿದಂತೆ, ತನ್ನದೇ ನುಡಿಯೊಳಗೆ ಪರಿಕಲ್ಪನೆಗಳನ್ನು ನೆಲೆಗೊಳಿಸಿಕೊಳ್ಳಲು ಮುಕ್ತವಾಗಿರುತ್ತದೆ. ಆದರೆ ಈ ಪರಿಕಲ್ಪನೆಗಳನ್ನು ರೂಪಿಸಿದ ಸೂಚಕಗಳ ಹಿಂದೆ ಅವುಗಳನ್ನು ರೂಪಿಸಿದವರ ಧೋರಣೆಗಳಿರುತ್ತವೆ. ಉದಾ.ಗೆ ಸಾಮಾಜಿಕ ತಾರತಮ್ಯವನ್ನು ಸೂಚಿಸುವ ಎಷ್ಟೊಂದು ಪದಗಳು ನಮ್ಮ ನುಡಿಯೊಳಗೆ ನೆಲೆನಿಂತಿವೆ. ಇದಕ್ಕೆ ಹೊರತಾಗಿಯೂ, ಒಂದೊಂದು ನುಡಿಯಲ್ಲಿಯೂ ತನ್ನದೇ ವಿಶೇಷ ಪದಕೋಶ ಮತ್ತು ಪದಸೂಚಕಗಳು ಇರುತ್ತವೆ.

ಉದಾ.ಗೆ ಜರ್ಮನ್ ಮತ್ತು ಫ್ರೆಂಚ್ ನುಡಿಗಳಲ್ಲಿ ಇಂಗ್ಲಿಶಿನ ‘ಮೈಂಡ್’ ಎಂಬ ಪದಕ್ಕೆ ಸಾಟಿಯಾದ ಪದವಿಲ್ಲ. ಹಾಗಂತ ಈ ಪರಿಕಲ್ಪನೆಯೇ ಈ ನುಡಿಗಳಲ್ಲಿ ಇಲ್ಲವೆಂದಲ್ಲ. ಹಾಗೂ ಝೆಫ್ಟಿಶ್ ಎನ್ನುವ ನುಡಿಯಲ್ಲಿ ಇಂಗ್ಲಿಶಿನ ಬಹುವಚನ ಸರ್ವನಾಮ ‘ವೀ’ ಎಂಬುದಕ್ಕೆ ಸಮನಾದ ಸರ್ವನಾಮವಿಲ್ಲ. ಆದರೆ ಈ ಕಲ್ಪನೆಯನ್ನು ಸೂಚಿಸುವ ವಿಭಿನ್ನ ಸರ್ವನಾಮ ರೂಪಗಳು ಈ ನುಡಿಯಲ್ಲಿವೆ. ‘ವೀ’ಗೆ ಸಂವಾದಿಯಾಗಿ ‘ಕಿತ’ (ಟು ಆಫ್ ಅಸ್ ಎಂದು ಅರ್ಥ. ಅಂದರೆ, ಮೀ ಆ್ಯಂಡ್ ಯು ಎಂದು), ‘ಕಿಮಿ’ (ಮೀ ಆ್ಯಂಡ್ ಸಮ್‍ಒನ್‍ಎಲ್ಸ್ ಬಟ್ ನಾಟ್ ಯು ಎಂದು ಅರ್ಥ) ಹಾಗೂ ‘ಟಯೋ’ (ಮೀ ಆ್ಯಂಡ್ ಯು ಆ್ಯಂಡ್ ಸಮ್‍ಒನ್‍ಎಲ್ಸ್ ಎಂದು ಅರ್ಥ) ಎಂಬ ಮೂರು ಭಿನ್ನ ರೂಪಗಳಿವೆ. ಈ ‘ವೀ’ ಎಂಬ ಸರ್ವನಾಮಕ್ಕೆ ತಮಿಳಿನಲ್ಲಿ ‘ನಮ್ಮ್’ ಮತ್ತು ‘ನಾಂಗ್’ ಎನ್ನುವ ಎರಡು ರೂಪಗಳಿವೆ. ಆದರೆ ಕನ್ನಡದಲ್ಲಿ ‘ನಾವು’ ಎನ್ನುವ ಒಂದೇ ರೂಪ ಇವತ್ತು ಬಳಕೆಯಲ್ಲಿದೆ.

ಸಮುದಾಯಗಳ ಸಂಸ್ಕ್ರುತಿಯ ಮೂಲಭೂತ ವಿನ್ಯಾಸಗಳನ್ನಾಗಿ ಇಂತಹ ಕೆಲವು ಕೋರ್ ವ್ಯಾಲ್ಯೂಗಳನ್ನು ಗುರುತಿಸಲಾಗುತ್ತದೆ. ಈ ಮೌಲ್ಯಗಳನ್ನು ಪ್ರತೀ ಸಮುದಾಯದ ಸಂಸ್ಕ್ರುತಿಯನ್ನು ಬಿಂಬಿಸುವ ಮೂಲಭೂತ ಅಂಶಗಳಲ್ಲಿ ಒಂದೆಂದು ಮಾನ್ಯಮಾಡಲಾಗುತ್ತದೆ.

ಮತ್ತು ಆಯಾ ಸಮೂಹಗಳ ಸಾಂಕೇತಿಕ ಪ್ರಾತಿನಿಧ್ಯತೆ ಹಾಗೂ ಸದಸ್ಯತ್ವವನ್ನು ಪಡೆದುಕೊಳ್ಳಲೂ ಈ ಮೌಲ್ಯಗಳನ್ನು ಪರಿಗಣಿಸಲಾಗುತ್ತದೆ (ಸ್ಮೋಲಿಕ್ಜ್ ಜೆ, 1981:76). ಏಕೆಂದರೆ, ಈ ಕೋರ್ ಮೌಲ್ಯಗಳ ಸಿದ್ಧಾಂತವು ಸಮೂಹಗಳನ್ನು ವಿಶಷ್ಟ, ಜನಾಂಗೀಯ, ಧಾರ್ಮಿಕ, ಸಾಂಸ್ಕ್ರುತಿಕ ಸಮುದಾಯಗಳನ್ನಾಗಿ ಬಲಪಡಿಸಲು ಒತ್ತಾಸೆಯಾಗುತ್ತದೆ ಎಂಬ ವಾದವನ್ನು ಸಮಾಜಶಾಸ್ತ್ರಜ್ಞ ಸೋಲ್ಮಿಕ್ಜ್. ಜೆ (1999) ಅತ್ಯಂತ ಬಲವಾಗಿ ಮಂಡಿಸುತ್ತಾನೆ. ಸಮೂಹಗಳ ಅಸ್ಮಿತೆಯನ್ನು ಗುರುತಿಸುವಲ್ಲಿ ಸಾಂಸ್ಕ್ರುತಿಕ ವಿನ್ಯಾಸಗಳು ಅತ್ಯಂತ ನಿರ್ಣಾಯಕ ಮತ್ತು ವಿಶಿಷ್ಟವೆಂದು ಪರಿಗಣಿಸಿದಾಗಲೆಲ್ಲಾ ಈ ವಾದವು ನೆರವಾಗುತ್ತದೆ.

ನುಡಿ ಮತ್ತು ಜನಾಂಗಗಳ ನಡುವಿನ ನಂಟಸ್ತಿಕೆಯನ್ನು ವಿವರಿಸಲು ಸ್ಮೋಲಿಕ್ಜ್ ವಿಭಿನ್ನ ಜನಾಂಗಗಳ ಮಾದರಿಗಳನ್ನು ಉಲ್ಲೇಖಿಸುತ್ತಾನೆ (1981:76-81). ಯಾವುದೇ ಜನಾಂಗೀಯತೆಯ ಸಾಮಾಜಿಕ ಅಂತಸ್ತನ್ನು ಸೂಚಿಸಲು ಈ ಕೋರ್ ಮೌಲ್ಯವನ್ನು ಸಂಸ್ಕ್ರುತಿಯ ಅತ್ಯಂತ ಮಹತ್ವದ ಗುಣವೆಂದು ಬಣ್ಣಿಸಲಾಗುತ್ತದೆ. ಮುಖ್ಯವಾಗಿ ತಾಯ್ನುಡಿಯ ಪರಿಕಲ್ಪನೆಯನ್ನು ಬಲಪಡಿಸುವಲ್ಲಿ ಇಂತಹ ತಾತ್ವಿಕ ಚೌಕಟ್ಟುಗಳು ಪುಷ್ಟಿ ನೀಡುತ್ತವೆ.

ಅಂದರೆ, ಸಂಸ್ಕ್ರುತಿಯನ್ನು ನುಡಿಯೊಂದರ ಸಾಂಕೇತಿಕ ವಿನ್ಯಾಸವನ್ನಾಗಿ ಇದನ್ನು ಮುಂಚೂಣೆಗೆ ತರಲಾಗುತ್ತದೆ. ನುಡಿಕೇಂದ್ರಿತ ಆರಾಧನೆಯ ಮಾದರಿಯನ್ನು ಇಲ್ಲಿ ನಿಚ್ಚಳವಾಗಿ ಕಾಣುತ್ತೇವೆ. ನುಡಿಯೊಂದನ್ನು ಜ್ಞಾನ ಪ್ರಸಾರಣದ ನೆಲೆಯನ್ನಾಗಿ ರೂಪಿಸುವ ಬದಲು ಭಾವನಾತ್ಮಕ ವಿದ್ಯಮಾನವಾಗಿ ಕಲ್ಪಿಸಲಾಗುತ್ತದೆ. ನುಡಿ ಬೆಳವಣಿಗೆ ಎಂಬುದು ಆಯಾ ಸಮುದಾಯಗಳ ಸಾಮಾಜಿಕ ಮತ್ತು ಆರ್ಥಿಕ ವಿದ್ಯಮಾನಗಳನ್ನು ರೂಪಿಸಲು ಹೇಗೆ ಮತ್ತು ಎಷ್ಟು ನೆರವಾಗುತ್ತದೆ ಅನ್ನುವುದನ್ನು ಆಧರಿಸುತ್ತದೆ.

ಹಾಗಾಗಿ ಅಸ್ಮಿತೆ ಎನ್ನುವುದು ಕೇವಲ ಸಂವಹನ ಮಾಧ್ಯಮಕ್ಕೆ ಸಂಬಂಧಿಸಿದ ಪ್ರಶ್ನೆಯಲ್ಲ. ಅದು ನಮ್ಮ ಬದುಕಿನ ಅನುಭವಗಳು, ನಮ್ಮ ಹಾಗೂ ಮುಂದಿನ ತಲೆಮಾರುಗಳ ಸ್ವಾಯತ್ತ ಬದುಕಿನ ದಾರಿಗಳನ್ನು ರೂಪಿಸುವ ಬಗೆಯೂ ಆಗಿರುತ್ತದೆ. ಈ ಚಹರೆಗಳು ಮತ್ತು ತಿಳಿವಿನ ವಿನ್ಯಾಸಗಳು ಆಯಾ ಸಮುದಾಯದ ನುಡಿಯೊಡನೆ ಬೆರೆತುಗೊಂಡಿರುತ್ತವೆ. ಇವುಗಳು ಆಯಾ ನುಡಿಯಲ್ಲಿಯೇ ಅಂತಸ್ಥವಾಗಿರುತ್ತವೆ ಎಂದು ನಾನು ಹೇಳಲಾರೆ.

ಆದರೆ ಸಮೂಹಗಳ ವಿಮೋಚನೆ, ನಿಯಂತ್ರಣ ಹಾಗೂ ಸ್ವಾಯತ್ತತೆಯ ರಚನೆಗಳು ಆಯಾ ನುಡಿಯಲ್ಲಿ ನೆಲೆಗೊಂಡಿರುತ್ತವೆ. ಆದ್ದರಿಂದ ನುಡಿ ಒಂದು ಹಕ್ಕಾಗಿ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಸ್ವಾಯತ್ತತೆಯನ್ನು ಪಡೆದಿರುತ್ತದೆ. ಸಬಾಳ್ವೆಯನ್ನು ವಿರೋಧಿಸುವ, ಪ್ರತಿಪಾದಿಸುವ ಮತ್ತು ಕಂಡರಿಸುವ ವಿದ್ಯಮಾನವಾಗಿರುತ್ತದೆ. ಕನ್ನಡ ಸಮುದಾಯಗಳಲ್ಲಿ ಶೋಷಣೆಗೆ ಒಳಗಾಗಿರುವ ಸಮೂಹಗಳು ಬೇರೊಂದು ನುಡಿಯ ಮೂಲಕ ತಮ್ಮ ಸರ್ವಸ್ವತಂತ್ರ ಅಸ್ಮಿತೆಯನ್ನು ಪಡೆಯಲು ಹೇಗೆ ಸಾಧ್ಯ? ಇಂತಹದೊಂದು ವಿದ್ಯಮಾನ ಇದುವರೆಗೂ ಜರಿಗಿರುವುದಿಲ್ಲ. ಮಾನವರ ಅದಮ್ಯ ಚೈತನ್ಯ ಒಂದು ಪ್ರತ್ಯೇಕ ನೆಲೆಯಲ್ಲ.

ದಿಟ, ಬದುಕಿನ ಆಚರಣೆಗಳಿಗೂ ನುಡಿಗೂ ಯಾವುದೇ ಸಾವಯವ ನಂಟಸ್ತಿಕೆ ಇಲ್ಲವಾದರೂ ಅವುಗಳು ಒಂದು ಮತ್ತೊಂದನ್ನು ನೆಮ್ಮಿಕೊಂಡಿರುತ್ತದೆ. ಹಾಗಾಗಿ ನುಡಿಯೊಳಗಿನ ಬಹುತ್ವ ಅದು ಸಾಂಸ್ಕ್ರುತಿಕ ಬಹುತ್ವವಾಗಿ ತೋರುತ್ತದೆ. ನುಡಿ ಚೈತನ್ಯ, ನುಡಿ ಮಾನ್ಯತೆ ಮತ್ತು ನುಡಿ ಅಸ್ಮಿತೆಗಳು ಏರ್ಪಡುವುದು ಕೇವಲ ಸಮೂಹಗಳ ಚೈತನ್ಯವಾಗಿ ಮೈದಾಳುತ್ತವೆ. ಒಂದುವೇಳೆ, ಇಂತಹ ಸಮುದಾಯ ತನ್ನದೇ ನುಡಿ ಜಾಯಮಾನಗಳಿಂದ ಕಳಚಿಕೊಂಡು, ಬೆರೊಂದು ನುಡಿ ಸಮುದಾಯದಲ್ಲಿ ಐಕ್ಯವಾದರೆ, ಆ ಸಮುದಾಯದ ಅಸ್ಮಿತೆಯ ರಚನೆಗಳು ಯಾವವು? ಏಕೆಂದರೆ, ಆ ಸಮುದಾಯದ ಸಾಂಸ್ಕ್ರುತಿಕ ಕುರುಹುಗಳು ಇಲ್ಲವೇ ಆಚರಣೆಗಳು, ಈಗಾಗಲೇ ಇದು ಐಕ್ಯಗೊಂಡ ನುಡಿಯ ವ್ಯಾಪ್ತಿಯೊಳಗೆ ಸೇರಿಕೊಳ್ಳಲು ಸಾಧ್ಯವಿಲ್ಲ.

ಸಾಮಾಜಿಕ ಆಚರಣೆಗಳು ಮತ್ತು ಸಂವಹನ ಮಾದರಿಗಳು ಪ್ರತ್ಯೇಕವಾಗಿ ವ್ಯವಹರಿಸುತ್ತವೆಯೇ? ಅಂದರೆ ಸಮುದಾಯಗಳ ನೆನಪು ಹಾಗೂ ಲೋಕಗ್ರಹಿಕೆಗಳು ಅವರ ತಿಳಿವಿನ ಮಾದರಿಗಳಾಗದೇ ಹೋದರೆ, ಆ ಸಮೂಹಗಳ ಅಸ್ತಿತ್ವ, ಅಸ್ಮಿತೆ, ಪ್ರಜ್ಞೆಯ ಚಹರೆಗಳು ಹೇಗೆ ಮೈಪಡೆಯುತ್ತವೆ? ಜನಾಂಗಗಳಿಗೆ ತಮ್ಮ ಬೇರುಗಳನ್ನು ನೆಲೆಗೊಳಿಸುವುದಕ್ಕೆ ತಮ್ಮದೇ ನುಡಿಯ ಅವಶ್ಯಕತೆ ಇರುತ್ತದೆ. ಸಮುದಾಯವೊಂದು ನುಡಿರಹಿತ ಅಸ್ತಿತ್ವವನ್ನು ಹೊಂದಿದ ಕಡೆಯಲ್ಲ ಪರಾಧೀನವಾಗಿರುತ್ತದೆ.

ಚರಿತ್ರೆ, ರಾಷ್ಟ್ರೀಯತೆ ಹಾಗೂ ರಾಜಕೀಯ ಅಧಿಕಾರದಂತಹ ನಿಲುವುಗಳನ್ನು ಕುರಿತು ನಾನು ಮಾತ್ನಾಡುತ್ತಿಲ್ಲ. ಬದಲಾಗಿ ಬದುಕಿನ ಅರಿವು-ತಿಳಿವುಗಳನ್ನು ಪ್ರಮಾಣಗೊಳಿಸುವ ಮಾನದಂಡಗಳನ್ನು ನಮ್ಮದೇ ನುಡಿಯ ಮೂಲಕ ಪಡೆಯಲು ಸಾಧ್ಯವೇ ಹೊರತು ಈ ವಿನ್ಯಾಸಗಳನ್ನು, ಬೇರೊಂದು ನುಡಿಯಲ್ಲಿ ಸಂಚಿತವಾಗಿರುವ ತಿಳಿವಿನಿಂದಲ್ಲ. ಪದಗಳ ಎರವಲು ಇಲ್ಲವೇ ಅನುಭವಗಳ ಅನುವಾದದಿಂದ ನುಡಿಯೊಂದು ಬೆಳೆಯುತ್ತದೆ ಎನ್ನುವ ಕಲ್ಪನೆಯೇ ಅತ್ಯಂತ ಸಂಕುಚಿತ ಕಣ್ನೋಟದಿಂದ ಕೂಡಿದೆ.

ಹೌದು, ಇಂಗ್ಲಿಶು ನುಡಿ ಮುನ್ನೂರ ಅರವತ್ತಕ್ಕೂ ಹೆಚ್ಚು ನುಡಿಗಳಿಂದ ಪದಗಳನ್ನು ಎರವಲು ಪಡೆದಿದೆ. ಹಾಗಂತ, ಅದು ತನ್ನ ಜಾಯಮಾನವನ್ನೇ ಕಳಿಚಿಕೊಂಡು, ಈ ಎಲ್ಲ ನುಡಿಗಳ ಜಾಯಮಾನಕ್ಕೆ ಒಗ್ಗಿಕೊಂಡಿದೆ ಎಂದಲ್ಲ. ಬೇರೆ ನುಡಿಗಳ ತಾತ್ವಿಕ ಮತ್ತು ಜ್ಞಾನ ಮೀಮಾಂಸೆಗಳನ್ನು ಇಂಗ್ಲಿಶಿಗೆ ಅನುವಾದ ಮಾಡುವುದರ ಹಿಂದಿನ ಉದ್ದೇಶ ಕೇವಲ ಆ ನುಡಿಯ ಬೆಳವಣಿಗೆಗೆ ಸೀಮಿತವಾಗಿಲ್ಲ.

ಇದು ಜಿಯೋ-ಪಾಲಿಟಿಕ್ಸ್‍ಗೆ ಸಂಬಂಧಿಸಿದ ಇಕ್ಕಟ್ಟುಗಳನ್ನು ಬಗೆಹರಿಸಿಕೊಳ್ಳುವ ವಿಧಾನ ಮಾತ್ರ. ಅಂತರ್ರಾಷ್ಟ್ರೀಯ ಸಂವಹನ ಮಾಧ್ಯಮವಾಗಿ ಇಂಗ್ಲಿಶು ವ್ಯವಹರಿಸುವುದರಿಂದ ಈ ಎರವಲು ಮತ್ತು ಅನುವಾದ ಪ್ರಕ್ರಿಯೆಗಳು ಯಥೇಚ್ಛವಾಗಿ ನಡೆಯುತ್ತವೆ.

ಇದನ್ನು ಸಾರಸಗಟಾಗಿ ಕನ್ನಡ ನುಡಿಯ ಪ್ರಗತಿ ಮತ್ತು ಜ್ಞಾನ ಮೀಮಾಂಸೆಗಳ ಬೆಳವಣಿಗೆಯ ಸೂಚಕವನ್ನಾಗಿ ಪರಿಗಣಿಸಲು ಸಾಧ್ಯವಿಲ್ಲ. ಗ್ರೀಕ್, ಸಂಸ್ಕ್ರುತ, ಪರ್ಶಿಯನ್ ಮೊದಲಾದ ನುಡಿಗಳಲ್ಲಿ ಮೈದಾಳಿದ ಪುರಾಣ, ಶಾಸ್ತ್ರಗಳು ಮತ್ತು ಮೀಮಾಂಸೆಗಳನ್ನು ಎಲ್ಲಿಂದ ಎರವಲು ಪಡೆಯಲಾಯಿತು ಮತ್ತು ಯಾವ ನುಡಿಗಳಿಂದ ಅನುವಾದ ಮಾಡಲಾಯಿತು ಎಂಬುದೆಲ್ಲ ವಿಸ್ಮಯವೇ ಸರಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು

Published

on

~ ಯೋಗೇಶ್ ಮಾಸ್ಟರ್

ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.

ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.

ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.

ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?

ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.

ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.

ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.

ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

Continue Reading

ಅಂತರಂಗ

ದಿಮಾಗಿ ನಕ್ಸಲ್-ನಗರ ನಕ್ಸಲ್

Published

on

~ರಹಮತ್ ತರೀಕೆರೆ, ಚಿಂತಕರು

ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.

ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.

ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.

ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.

ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.

ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರ‍ಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.

ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್‍ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.

ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.

ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು

Published

on

~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ

ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.

ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.

 

ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.

ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

Continue Reading

Trending