ದಿನದ ಸುದ್ದಿ
ಅಂಬೇಡ್ಕರ್ : ಅಂತಿಮ ಯಾತ್ರೆಯ ಆರ್ದ್ರ ಚಿತ್ರಗಳು
- ಎನ್.ಆರ್. ಶಿವರಾಂ
ಡಿಸೆಂಬರ್ 4, 1956ನೇ ಇಸವಿ. ಡಾ. ಅಂಬೇಡ್ಕರ್ ಅವರು ರಾಜ್ಯಸಭೆಯ ಕಲಾಪಗಳಲ್ಲಿ ಭಾಗವಹಿಸಿದ್ದರು. ಮರುದಿನ ಮನೆಯಲ್ಲೇ ಉಳಿದುಕೊಂಡು ಬರವಣಿಗೆಯಲ್ಲಿ ತೊಡಗಿಕೊಂಡಿದ್ದರು. ಅಂದು ರಾತ್ರಿ 8ಕ್ಕೆ, ಜೈನ ಮುನಿಗಳೊಬ್ಬರು ಅಂಬೇಡ್ಕರ್ರವರನ್ನು ಭೇಟಿ ಮಾಡಿ ನಾಳಿನ ಒಂದು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದರು. ರಾತ್ರಿ 11.15ಕ್ಕೆ ಲೇಖನಿ ಕೆಳಗಿಡುವ ವೇಳೆಗೆ ಬಾಬಾ ಸಾಹೇಬರು ಸಾಕಷ್ಟು ಬಳಲಿದ್ದರು. ನಂತರ ಕೊಂಚ ಊಟ ಮಾಡಿದರು.
ತಮ್ಮ ಆಪ್ತ ಕಾರ್ಯದರ್ಶಿ ನಾನಕ್ಚಂದುರತ್ತು ಜೊತೆ ‘ಬುದ್ಧ ಅಂಡ್ ಹಿಸ್ ಧಮ್ಮ’ ಗ್ರಂಥದ ಬಗ್ಗೆ ಮಾತನಾಡಿದರು ಹಾಗೂ ಈ ಪುಸ್ತಕದ ಅರ್ಪಣೆಯ ಟೈಪ್ ಮಾಡಿದ ಪುಟಗಳನ್ನು ಜೊತೆಗೆ ಬರ್ಮಾ ಸರ್ಕಾರಕ್ಕೆ ತಾವು ಬರೆದಿರುವ ಪತ್ರಗಳನ್ನು ತೆಗೆದು ತಮ್ಮ ಟೇಬಲ್ ಮೇಲಿಡುವಂತೆ ಸೂಚಿಸಿದರು. ರಾತ್ರಿ ಮತ್ತೊಮ್ಮೆ ಅವುಗಳನ್ನು ಪರಿಶೀಲಿಸುವುದು ಅವರ ಉದ್ದೇಶವಾಗಿತ್ತು. ‘ಬೆಳಿಗ್ಗೆ ಬೇಗನೇ ಬಂದುಬಿಡು. ಅವುಗಳೆಲ್ಲವನ್ನು ನಾಳೆಯೇ ತುರ್ತಾಗಿ ಕಳುಹಿಸಬೇಕು’ ಎಂದು ಹೇಳಿದರು.
ಎಲ್ಲ ಕೆಲಸ ಮುಗಿಸಿ, ‘ಬೆಳಿಗ್ಗೆ ಬೇಗ ಬರುವೆ’ ಎಂದು ಹೇಳಿದ ರತ್ತು ತಮ್ಮ ಸೈಕಲ್ ಹತ್ತಿ ಮನೆಗೆ ತೆರಳಿದರು. ನಂತರ ಬಾಬಾ ಸಾಹೇಬರು ಟೇಬಲ್ ಮೇಲಿಟ್ಟಿದ್ದ ಎಲ್ಲಾ ಕಾಗದ ಪತ್ರಗಳನ್ನು ಓದಿ ಮುಗಿಸಿ, ತಡರಾತ್ರಿ ಮಲಗಿಕೊಂಡರು. ಡಿಸೆಂಬರ್ 6ರ ಮುಂಜಾವು. ಬೆಳಿಗ್ಗೆ 6.30ಕ್ಕೆ ಬಾಬಾ ಸಾಹೇಬರ ಪತ್ನಿ ಸವಿತಾ ಅಂಬೇಡ್ಕರ್ ಅವರು ಚಹಾದೊಂದಿಗೆ ಕೊಠಡಿಗೆ ಬಂದರು. ಬಾಬಾ ಸಾಹೇಬರು ನಿದ್ದೆಯಲ್ಲಿದ್ದರು. ಅದು ಚಿರನಿದ್ರೆ.
ತಕ್ಷಣವೇ ರತ್ತು ಅವರಿಗೆ ಕರೆ ಹೋಯಿತು. ಅಂಬೇಡ್ಕರ್ ನಿಧನರಾದ ಸುದ್ದಿಯನ್ನು ನಂತರ ಆಕಾಶವಾಣಿಗೆ ತಿಳಿಸಲಾಯಿತು. ಈ ವಾರ್ತೆ ರೇಡಿಯೊದಲ್ಲಿ ಬಿತ್ತರಗೊಳ್ಳುತ್ತಿದ್ದಂತೆ ಇಡೀ ದೇಶದ ಸೂತಕದ ಸಂಚಲನೆ. ಬಾಬಾ ಸಾಹೇಬರ ಕೋಟಿ ಕೋಟಿ ಅನುಯಾಯಿಗಳು ದಿಗ್ಭ್ರಾಂತರಾದರು. ಲಕ್ಷ ಲಕ್ಷ ಜನರು ಅಂಬೇಡ್ಕರ್ರವರು ಕೊನೆಯುಸಿರೆಳೆದ ನವದೆಹಲಿಯ ಅಲಿಪುರ ರಸ್ತೆಯಲ್ಲಿರುವ 26ನೇ ನಂಬರಿನ ಬಂಗಲೆಯತ್ತ ಧಾವಿಸಲಾರಂಭಿಸಿದರು. ಅಂಬೇಡ್ಕರ್ರವರ ಪಾರ್ಥಿವ ಶರೀರವನ್ನು ಅವರ ಕರ್ಮಭೂಮಿ ಮುಂಬೈಗೆ ತರುವುದಾಗಿಯೂ, ಮುಂಬೈನಲ್ಲೇ ಅಂತಿಮ ಶವಸಂಸ್ಕಾರ ಮಾಡುವುದಾಗಿಯೂ ಪ್ರಕಟಿಸಲಾಯಿತು.
ದುಡ್ಡಿನ ಕೊರತೆ
1947ರಲ್ಲಿ ಬ್ರಿಟೀಷರು ಭಾರತಕ್ಕೆ ಸ್ವಾತಂತ್ರ್ಯ ನೀಡುವಾಗ ಅಖಂಡ ಭಾರತವನ್ನು ಭಾರತ ಮತ್ತು ಪಾಕಿಸ್ತಾನಗಳೆಂದು ಎರಡು ಪ್ರತ್ಯೇಕ ರಾಷ್ಟ್ರಗಳನ್ನಾಗಿ ವಿಭಜಿಸಿದರು. ಆ ಸಂದರ್ಭದಲ್ಲಿ ಅಂಬೇಡ್ಕರ್ ಅವರು ದಲಿತರಿಗಾಗಿಯೂ ಒಂದು ಪ್ರತ್ಯೇಕ ರಾಷ್ಟ್ರ ಕೇಳಿದ್ದರೆ, ಭಾರತ ಮೂರು ಪ್ರತ್ಯೇಕ ದೇಶಗಳನ್ನಾಗಿ ವಿಭಜನೆ ಹೊಂದುತ್ತಿತ್ತೇನೋ? ಆಗ ದಲಿತರಿಗಾಗಿ ರೂಪುಗೊಳ್ಳುವ ದೇಶಕ್ಕೆ ಅಂಬೇಡ್ಕರ್ ಅವರು ತಾವು ಬದುಕಿರುವವರೆಗೂ ಪ್ರಧಾನಮಂತ್ರಿ ಆಗಿರಬಹುದಿತ್ತು. ಆದರೆ ಬುದ್ಧನ ತತ್ವಗಳಿಂದ ಪ್ರಭಾವಿತರಾಗಿದ್ದ ಅವರು ಪ್ರಧಾನಿಯಾಗುವ ಆಸೆಯಿಂದ ಅಖಂಡ ಭಾರತವನ್ನು ಹೋಳು ಮಾಡಲು ಇಷ್ಟಪಡಲೂ ಇಲ್ಲ ಮತ್ತು ಅಂತಹ ಪ್ರಯತ್ನಕ್ಕೆ ಕೈ ಹಾಕಲೂ ಇಲ್ಲ.
ಅಧಿಕಾರದ ಮಾತಿರಲಿ, ಅಂಬೇಡ್ಕರ್ ತಮ್ಮ ವಿದ್ಯೆ–ತಿಳಿವಳಿಕೆಯನ್ನು ವಾಣಿಜ್ಯೋದ್ಯಮಕ್ಕೆ ಬಳಸಿಕೊಂಡಿದ್ದರೆ ಬಹುದೊಡ್ಡ ವಾಣಿಜ್ಯೋದ್ಯಮಿಯಾಗಿ ರೂಪುಗೊಳ್ಳಲು ಸಾಧ್ಯವಿತ್ತು. ಅವರಿಗಿದ್ದ ಜ್ಞಾನ ಮತ್ತು ಪ್ರತಿಭೆಗೆ ಅವರು ವಿದೇಶದಲ್ಲಿ ಉನ್ನತ ಹುದ್ದೆ ಪಡೆದು ಅಲ್ಲಿಯೇ ನೆಲೆಸಬಹುದಿತ್ತು.
ಆದರೆ, ಅವರದು ಭಾರತದಲ್ಲಿಯೇ ಉಳಿದು ಪ್ರವಾಹದ ವಿರುದ್ಧ ಈಜುವ ಮನೋಭಾವವಾಗಿತ್ತು. ಜ್ಞಾನ–ಶೀಲ–ಸ್ವಾಭಿಮಾನ ಮತ್ತು ಪ್ರಾಮಾಣಿಕತೆಗಳನ್ನೇ ಉಸಿರಾಡುವಂತೆ ಕಾಣಿಸುತ್ತಿದ್ದ ಅವರು ತಮ್ಮ ಬದುಕಿನ ಕೊನೆಯವರೆಗೂ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದ್ದರು. ಆ ಮುಗ್ಗಟ್ಟು ಅವರ ಸಾವಿನ ಸಂದರ್ಭದಲ್ಲೂ ಎದುರಾಯಿತು.
ಅಂಬೇಡ್ಕರ್ ಅವರ ದೇಹವನ್ನು ದೆಹಲಿಯಿಂದ ಮುಂಬೈಗೆ ಸಾಗಿಸಲು ಇಂಡಿಯನ್ ಏರ್ಲೈನ್ಸ್ನ ಲಘು ವಿಶೇಷ ವಿಮಾನವನ್ನು ಬಾಡಿಗೆಗೆ ಕೇಳಿದಾಗ, 5,000 ರೂಪಾಯಿ ಬಾಡಿಗೆಯಾಗುತ್ತದೆಂದು ತಿಳಿಸಲಾಯಿತು. ‘ಭಾರತದ ಸಂವಿಧಾನ ಶಿಲ್ಪಿ’ ಎನ್ನುವ ಖ್ಯಾತಿಯ ಹಾಗೂ ಕೇಂದ್ರ ಸರ್ಕಾರದ ಮಾಜಿ ಕಾನೂನು ಮಂತ್ರಿಗಳೂ ಆದ ಅಂಬೇಡ್ಕರ್ ಅವರ ಅಲ್ಮೇರಾ ತೆರೆದು ನೋಡಿದರೆ ಅಲ್ಲಿದ್ದುದು ಕೇವಲ 300 ರೂಪಾಯಿ! ರತ್ತುರವರು ಶ್ರೀಮತಿ ಸವಿತಾ ಅಂಬೇಡ್ಕರ್ರವರಲ್ಲಿ ವಿಚಾರಿಸಿದರೆ, ಅವರು ನನ್ನ ಹತ್ತಿರ ಸ್ವಲ್ಪವೂ ಹಣವಿಲ್ಲವೆಂದರು. 5,000 ರೂಪಾಯಿ ಹಣ ಹೊಂದಿಸಲು ಸಾಧ್ಯವಾಗದ ಪರಿಸ್ಥಿತಿ ಎದುರಾಯಿತು. ಆಗ ಟಿ.ಬಿ. ಬೋನ್ಸ್ಲೆ ಎನ್ನುವವರು ತಮ್ಮ ಅಂಬಾಸಿಡರ್ ಕಾರನ್ನು ಮಾರಾಟ ಮಾಡಿ ಹಣ ನೀಡಲು ಮುಂದಾದರು.
ಆದರೆ ಆ ಕಾರನ್ನು ತಕ್ಷಣಕ್ಕೆ ಕೊಳ್ಳಲು ಯಾರೂ ಮುಂದಾಗಲಿಲ್ಲ. ಕೊನೆಗೆ ಅಂದಿನ ಸಂಪರ್ಕ ಖಾತೆ (ವಿಮಾನಯಾನವೂ ಸೇರಿದಂತೆ) ಸಚಿವರಾದ ಬಾಬು ಜಗಜೀವನರಾಂ ಅವರನ್ನು ಸಂಪರ್ಕಿಸಲಾಯಿತು. ಅವರು, ‘ವಿಮಾನವನ್ನು ಉಚಿತವಾಗಿ ಬಯಸುತ್ತೀರೋ ಅಥವಾ ಅರ್ಧ ಬೆಲೆಯ (ರೂ. 2,500) ಬಾಡಿಗೆಗೆ ಬಯಸುತ್ತೀರೋ’ ಎಂದು ಅಂಬೇಡ್ಕರ್ರವರ ಮತ್ತೊಬ್ಬ ಸಹಾಯಕರಾದ ಡಾ. ಶಂಕರಾನಂದ ಶಾಸ್ತ್ರಿಯವರನ್ನು ಕೇಳಿದರು. ಅಂಬೇಡ್ಕರ್ರವರು ತಾವು ಬದುಕಿರುವಷ್ಟು ದಿನ ತನಗಾಗಿ ಯಾರಲ್ಲೂ ಏನನ್ನೂ ಬೇಡಿಕೊಂಡಿರಲಿಲ್ಲ.
ಹಾಗಾಗಿ ಉಚಿತವಾಗಿ ಬೇಡ, ಅರ್ಧ ಬಾಡಿಗೆಯನ್ನು ತಾನು ನೀಡುತ್ತೇನೆ. ಆದರೆ ಈಗ ಹಣ ಇಲ್ಲ. ಬಾಂಬೆಗೆ ಹೋದ ನಂತರ ಅಲ್ಲಿ ಈ ಹಣವನ್ನು ನೀಡುತ್ತೇನೆ, ಸಹಾಯ ಮಾಡಿ’ ಎಂದು ಶಂಕರಾನಂದ ಶಾಸ್ತ್ರಿಯವರು ಕೇಳಿಕೊಂಡರು. ತಕ್ಷಣ ಸ್ಪಂದಿಸಿದ ಜಗಜೀವನರಾಂರವರು– ‘ಸದ್ಯಕ್ಕೆ ನಿಮ್ಮಲ್ಲಿರುವ ಹಣವನ್ನು ಪಾವತಿಸಿ, ಉಳಿಕೆ ಹಣವನ್ನು ನಂತರ ಪಾವತಿಸಿ’ ಎಂದು ಹೇಳಿ ಇಂಡಿಯನ್ ಏರ್ಲೈನ್ಸನ ಲಘು ವಿಶೇಷ ವಿಮಾನಕ್ಕೆ ವ್ಯವಸ್ಥೆ ಮಾಡಿದರು. ನಂತರ ಈ ಉಳಿಕೆ ಹಣವನ್ನು ಬಾಂಬೆಯಲ್ಲಿ ಅಂಬೇಡ್ಕರ್ರವರ ನಿಕಟವರ್ತಿಗಳಾದ ‘ಗಾಯಕ್ವಾಡ್’ ಅವರು ಪಾವತಿಸಿದರು.
ಅಭಿಮಾನಿಗಳ ಅಶ್ರುತರ್ಪಣ
ದೆಹಲಿಯಲ್ಲಿ ಸಾರ್ವಜನಿಕರ ದರ್ಶನಕ್ಕಿಟ್ಟಿದ್ದ ಬಾಬಾ ಸಾಹೇಬರ ಪಾರ್ಥಿವ ಶರೀರವನ್ನು ಹೂವಿನಿಂದ ಅಲಂಕೃತವಾದ ಟ್ರಕ್ ಮೇಲಿಟ್ಟು ನಂ. 26, ಅಲಿಪುರ ರಸ್ತೆಯಲ್ಲಿನ ಮನೆಯಿಂದ ದೆಹಲಿಯ ಸಪ್ಧರ್ಜಂಗ್ ವಿಮಾನ ನಿಲ್ದಾಣಕ್ಕೆ ಮೆರವಣಿಗೆಯಲ್ಲಿ ತರಲಾಯಿತು. ಮಧ್ಯಾಹ್ನ 3ಕ್ಕೆ ಹೊರಟ ಮೆರವಣಿಗೆ, ಸುಮಾರು 7 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿದ್ದ ದುಃಖತಪ್ತ ಜನರು ಬಾಬಾಸಾಹೇಬರ ಪಾರ್ಥಿವ ಶರೀರದ ಜೊತೆ ಸಾಗಿದ್ದರಿಂದ ವಿಮಾನ ನಿಲ್ದಾಣವನ್ನು ಸೇರಬೇಕಾದರೆ ರಾತ್ರಿ 9 ಗಂಟೆಯಾಗಿತ್ತು.
ರಾತ್ರಿ 9.45ಕ್ಕೆ ಸರಿಯಾಗಿ ಬಾಬಾ ಸಾಹೇಬರ ದೇಹವನ್ನು ಹೊತ್ತ ವಿಶೇಷ ವಿಮಾನವು ಮುಂಬೈನತ್ತ ಪ್ರಯಾಣ ಬೆಳೆಸಿತು. ಈ ವಿಮಾನದಲ್ಲಿ ಸವಿತಾ ಅಂಬೇಡ್ಕರ್, ರತ್ತು, ಬಿಕ್ಕು ಆನಂದ ಕೌಸಲಾಯನ್, ಡಾ. ಶಂಕರಾನಂದ ಶಾಸ್ತ್ರಿ ಸೇರಿದಂತೆ 11 ಜನರಿದ್ದರು. ವಿಮಾನವು ನಿಲ್ದಾಣ ಬಿಟ್ಟು ಆಕಾಶಕ್ಕೇರಿದ ತಕ್ಷಣ ಆ ಪರಿಸರದಲ್ಲಿ ಜಮಾಯಿಸಿದ್ದ 7 ಲಕ್ಷಕ್ಕೂ ಅಧಿಕ ಜನರು ದುಃಖಪೂರಿತರಾಗಿ ‘ಬಾಬಾ ಸಾಹೇಬ್ ಅಂಬೇಡ್ಕರ್ ಅಮರ್ ರಹೇ’ ಎಂದು ಘೋಷಣೆ ಕೂಗಿದರು.
ಮುಂಬೈನ ಸಾಂತಾಕ್ರೂಜ್ ವಿಮಾನ ನಿಲ್ದಾಣಕ್ಕೆ ಬಾಬಾ ಸಾಹೇಬರ ಪಾರ್ಥಿವ ಶರೀರ ತಲುಪಿದಾಗ, ಅಲ್ಲಿ ಸುಮಾರು 5 ಲಕ್ಷ ಮಂದಿ ಡಿಸೆಂಬರ್ ಚಳಿಯನ್ನು ಲೆಕ್ಕಿಸದೆ ನೆರೆದಿದ್ದರು. ಸುಮಾರು 25–30 ಮೈಲಿಗಳಿಂದ ಅಂಬೇಡ್ಕರ್ರವರ ಅಭಿಮಾನಿಗಳು ನಡೆದುಕೊಂಡೇ ವಿಮಾನ ನಿಲ್ದಾಣ ಬಂದಿದ್ದರು. ವಿಮಾನ ನಿಲ್ದಾಣದಿಂದ ಅಂಬೇಡ್ಕರರ ಪಾರ್ಥಿವ ದೇಹ ಅವರ ಸ್ವಗೃಹ ‘ರಾಜಗೃಹ’ಕ್ಕೆ ಬಂದು ಸೇರುವಷ್ಟೊತ್ತಿಗೆ ಬೆಳಗಿನ ಜಾವ 5.30. ಡಿಸೆಂಬರ್ 7ರ ಬೆಳಿಗ್ಗೆ 11 ಗಂಟೆಯ ತನಕ ಬಾಬಾ ಸಾಹೇಬರ ಪಾರ್ಥಿವ ಶರೀರವನ್ನು ‘ರಾಜಗೃಹ’ದ ಪೋರ್ಟಿಕೋದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಯಿತು. ಬಾಬಾ ಸಾಹೇಬರ ಅಂತಿಮ ದರ್ಶನ ಪಡೆಯಲು ಸುಮಾರು 20 ಕಿ.ಮೀ.ಗಳಷ್ಟು ಉದ್ದದ ಕ್ಯೂ ಇತ್ತು.
ಹೂವಿನಿಂದ ಅಲಂಕೃತಗೊಂಡ ಟ್ರಕ್ನ ಮೇಲೆ ಹಾಸಿಗೆಯನ್ನಿಟ್ಟು, ಹಾಸಿಗೆಯ ಮೇಲೆ ಶೋಷಿತರ ವಿಮೋಚಕ ಬಾಬಾಸಾಹೇಬರ ಶವವನ್ನು ಮಲಗಿಸಲಾಯಿತು. ತಲೆಯ ಪಕ್ಕ ಭಗವಾನ್ ಬುದ್ಧನ ಪ್ರತಿಮೆ ಇಡಲಾಯಿತು. ನಂತರ ‘ದಾದರ್’ ಕಡೆಗೆ ಅಂತಿಮ ಯಾತ್ರೆ ಹೊರಟಿತು. ಬಾಬಾ ಸಾಹೇಬರ ಅಂತಿಮ ಯಾತ್ರೆಯಲ್ಲಿ ಸುಮಾರು 20 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ಇಷ್ಟೊಂದು ಬೃಹತ್ ಸಂಖ್ಯೆಯ ಜನರು ಭಾಗವಹಿಸಿದ್ದು ಮುಂಬೈನ ಇತಿಹಾಸದಲ್ಲೇ ಇರಲಿಲ್ಲ.
ಅಂಬೇಡ್ಕರ್ರವರು ಪ್ರಶಾಂತವಾಗಿ ಚಿರನಿದ್ರೆಯಲ್ಲಿ ಮಲಗಿರುವುದನ್ನು ನೋಡಲಾಗದೆ ಹೆಂಗಸರು ಸೇರಿದಂತೆ ಲಕ್ಷಾಂತರ ಜನ ಎದೆ ಬಡಿದುಕೊಂಡು ರೋಧಿಸುತ್ತಿದ್ದರು. ಅಂದು ಸಂಜೆ 6 ಗಂಟೆಗೆ ಅಂತಿಮಯಾತ್ರೆಯ ಶವ ಸಂಸ್ಕಾರ ಸ್ಥಳಕ್ಕೆ (ಚೈತ್ಯ ಭೂಮಿ) ಮೆರವಣಿಗೆ ತಲುಪಿತು. ಪಾರ್ಥಿವ ಶರೀರದ ಮುಂದೆ 2 ಲಕ್ಷ ಜನ ಬೌದ್ಧ ಧರ್ಮ ಸ್ವೀಕರಿಸುವ ಮೂಲಕ ಬಾಬಾ ಸಾಹೇಬರಿಗೆ ಗೌರವ ಸಲ್ಲಿಸಿದರು. (ಅದೇ ತಿಂಗಳ 16ರಂದು ಮುಂಬೈನಲ್ಲಿ 10 ಲಕ್ಷ ಜನರು ಅಂಬೇಡ್ಕರ್ ನೇತೃತ್ವದಲ್ಲಿ ಬೌದ್ಧ ಧರ್ಮ ಸ್ವೀಕರಿಸುವ ಕಾರ್ಯಕ್ರಮ ನಿಗದಿಯಾಗಿತ್ತು. ಈ ಕಾರ್ಯಕ್ರಮಕ್ಕೆ ಅಂಬೇಡ್ಕರ್ರವರು ಎಲ್ಲಾ ತಯಾರಿ ನಡೆಸಿದ್ದರು).
ಸಾಗರ- ಜನಸಾಗರ:
ಸಮುದ್ರದ ದಡದಲ್ಲಿ ಶವ ಸಂಸ್ಕಾರದ ಸ್ಥಳವಿತ್ತು. ಸಮುದ್ರದ ಒಳಗೆ ಸೊಂಟ ಮಟ್ಟದ ನೀರಿನಲ್ಲೇ ಜನರು ಗಂಟೆಗಟ್ಟಲೆ ನಿಂತಿದ್ದರು. ಜನರಿಗೆ ಬಾಬಾ ಸಾಹೇಬರ ಕಳೆಬರಹ ಕಾಣಲೆಂದು 6 ಅಡಿ ಎತ್ತರದ ಮಣ್ಣಿನ ದಿಬ್ಬ ನಿರ್ಮಿಸಿ, ಆ ದಿಬ್ಬದ ಮೇಲೆ ಗಂಧದ ಕಟ್ಟಿಗೆಗಳನ್ನಿಟ್ಟು ಅದರ ಮೇಲೆ ಬಾಬಾ ಸಾಹೇಬರನ್ನು ಮಲಗಿಸಲಾಗಿತ್ತು. ರಾತ್ರಿ 7.30ಕ್ಕೆ ಸರಿಯಾಗಿ ಅಂಬೇಡ್ಕರ್ ಪುತ್ರ ಯಶವಂತರಾವ್ ಅಂಬೇಡ್ಕರ್ರವರು ತಂದೆಯ ಚಿತೆಗೆ ಅಗ್ನಿಸ್ಪರ್ಶ ಮಾಡಿದರು.
ಶವಸಂಸ್ಕಾರವು ಬೌದ್ಧಧರ್ಮದ ವಿಧಿವಿಧಾನಗಳಂತೆ ನೆರವೇರಿತು. ವಿಶೇಷವೆಂದರೆ ಆ ಇಡೀ ರಾತ್ರಿ ಲಕ್ಷಾಂತರ ಜನರು ಅಲ್ಲೇ ಉಳಿದುಕೊಂಡಿದ್ದರು. ಬೆಳಿಗ್ಗೆ 6.30ಕ್ಕೆ ಅಲ್ಲಿಂದ ‘ಚಿತಾಭಸ್ಮ’ವನ್ನು ತೆಗೆದ ನಂತರ ಜನರು ಅಲ್ಲಿಂದ ತೆರಳಿದರು. ಚಿತಾಭಸ್ಮವನ್ನು ಒಂದು ಮಣ್ಣಿನ ಕುಡಿಕೆಯಲ್ಲಿಟ್ಟು ತೆರೆದ ವಾಹನದ ಮೂಲಕ ಅವರ ನಿವಾಸ ‘ರಾಜಗೃಹ’ಕ್ಕೆ ತರಲಾಯಿತು. ಚಿತಾಭಸ್ಮವನ್ನು ತರುವಾಗ ಮೆರವಣಿಗೆಯಲ್ಲಿ 5 ಲಕ್ಷ ಜನರು ಸೇರಿದ್ದರು. ಬಾಬಾ ಸಾಹೇಬ್ ಅಂಬೇಡ್ಕರ್ರವರ ಚಿತಾಭಸ್ಮವನ್ನು ಈಗ ಮುಂಬೈನಲ್ಲಿರುವ ಅವರ ಸಮಾಧಿ ಸ್ಥಳದಲ್ಲಿ ಮತ್ತು ನಾಗಪುರದಲ್ಲಿ ಸಂರಕ್ಷಿಸಿಡಲಾಗಿದೆ.
ಈಗಲೂ ಅಂಬೇಡ್ಕರ್ ಅವರ ಪರಿನಿರ್ವಾಣದ ದಿನ ಡಿಸೆಂಬರ್ 6ರಂದು, ಮುಂಬೈನ ಚೈತ್ಯಭೂಮಿಯಲ್ಲಿರುವ ಅವರ ಸಮಾಧಿಗೆ ದೇಶದ ಮೂಲೆ ಮೂಲೆಗಳಿಂದ ಜನರು ಬಂದು ಶ್ರದ್ಧಾಂಜಲಿ ಸಲ್ಲಿಸುತ್ತಾರೆ. ಡಿಸೆಂಬರ್ 6 ಅಂಬೇಡ್ಕರ್ ಸ್ಮೃತಿ ದಿನ ಮಾತ್ರವಲ್ಲದೆ, ಅದು ಮನುಷ್ಯತ್ವದ ಹೊಳಪನ್ನು ನವೀಕರಿಸುವ ದಿನವೂ ಆಗಿದೆ. ಎಲ್ಲ ಮಹಾತ್ಮರ ನೆನಪುಗಳಿಗೂ ಮಾನಸಿಕ ಕೊಳಕನ್ನು ತೊಳೆದು ಹೊಳಪು ನೀಡುವ ಜೀವಂತಿಕೆಯ ಮಾಂತ್ರಿಕ ಶಕ್ತಿ ಇರುತ್ತದಲ್ಲವೇ?
ಕೃಪೆ:ಪ್ರಜಾವಾಣಿ (0/12/2013)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು. ಈ ಬಗ್ಗೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.
ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸುಮಾರು 30 ಸಾವಿರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಿಬ್ಬಂದಿಗಳಿಗೆ ನೇಮಕಾತಿ ಮತ್ತು ವರ್ಗಾವಣೆ ಒಳಗೊಂಡು ಮಾನವ ಸಂಪನ್ಮೂಲ (HR Policy) ನೀತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕಳೆದ ಅ.28ರಂದು ಆದೇಶ ಹೊರಡಿಸಿ, ಅಭಿಯಾನ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಆರ್ಥಿಕ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಿದ್ದಾರೆ.
ಈ ವಿಷಯದ ಬಗ್ಗೆ ಈಗಾಗಲೇ ಅಭಿಯಾನ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಗುತ್ತಿಗೆ ನೌಕರರ ವೃಂದವಾರು ಸಂಘಟನೆಗಳ ಅಭಿಪ್ರಾಯ ನೀಡಲಾಗಿದೆ. ಎಲ್ಲಾ ಸಂಘಟನೆಗಳು ಈ ಒಂದು ಹೊಸ ಸಿಬ್ಬಂದಿಗಳಿಗೆ ಮಾರಕ ಇರುವಂತಹ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೊಳಿಸಲು ವಿರೋಧ ವ್ಯಕ್ತಪಡಿಸಿವೆ.
ಸರ್ಕಾರ ಈಗ ನೀಡುತ್ತಿರುವ ಕಡಿಮೆ ವೇತನದಲ್ಲಿ ಈ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಖಾಯಂ ಸಿಬ್ಬಂದಿಗಳಂತೆ ಕಡ್ಡಾಯ ವರ್ಗಾವಣೆ ಮಾಡಿದರೆ ಈ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಮೂರು ಮೂರು ತಿಂಗಳಿಗೊಮ್ಮೆ ವೇತನ ಆಗುತ್ತಿದ್ದು ಬೇರೆ ಜಿಲ್ಲೆಗೆ ಕಡ್ಡಾಯ ವರ್ಗಾವಣೆ ಮಾಡಿದ್ದರೆ ಮನೆ ಬಾಡಿಗೆ ಕಟ್ಟಲಾಗದೇ ಬೀದಿಗೆ ಬರಬೇಕಿದೆ ಎಂದು ಶಾಸಕರಿಗೆ ಮನವರಿಕೆ ಮಾಡಿದರು.
ಒಂದು ವೇಳೆ ಇಂತಹ ಕ್ರಮ ಕೈಗೊಂಡರೆ ಖಾಯಂ ಸಿಬ್ಬಂದಿಗಳಿಗೆ ನೀಡಿದಂತೆ ಎಲ್ಲಾ ಸೌಕರ್ಯ ಹಾಗೂ ಖಾಯಂ ಸೇರಿದಂತೆ ವೇತನ ಹೆಚ್ಚಳ ಮಾಡಿ, ಟಿಎ, ಡಿಎ, ಎಚ್ ಆರ್ ಎ ನೀಡಿ ಇಂತಹ ಆದೇಶ ಮಾಡಬೇಕು. ಸಿಬ್ಬಂದಿಗಳಿಗೆ ಬೆನ್ನು ತಟ್ಟಿ ಕೆಲಸ ಮಾಡಿಸಿಕೊಳ್ಳಬೇಕು.ಅದು ಬಿಟ್ಟು ಹೊಟ್ಟೆ ಮೇಲೆ ಹೊಡೆಯುವಂತಹ ಯಾವುದೇ ಆದೇಶ ಹೊರಡಿಸುವುದು ಎಷ್ಟು ಸರಿ ಎಂದು ಸಿಬ್ಬಂದಿಗಳು ಪ್ರಶ್ನೆ ಮಾಡಿದ್ದಾರೆ.
ಪ್ರಧಾನ ಕಾರ್ಯದರ್ಶಿಗಳ ಈ ಒಂದು ಪತ್ರ 30 ಸಾವಿರ ನೌಕರರಿಗೆ ಆತಂಕ ಸೃಷ್ಟಿ ಮಾಡಿದೆ. ಇದು ಈ ವರ್ಷದಲ್ಲಿ ಮೊದಲ ಸಾರಿ ಅಲ್ಲದೆ ಇದೇ ವರ್ಷ ಸಾಕಷ್ಟು ಮಾನಸಿಕ ಒತ್ತಡ ಹೆಚ್ಚಳವಾಗಿರುವ ಅನೇಕ ಆದೇಶ ಮಾಡಿದ್ದಾರೆ.
ಪ್ರತಿ ವರ್ಷ ಏಪ್ರಿಲ್ ಒಂದನೇ ತಾರೀಖು ಎಲ್ಲಾ ನೌಕರರಿಗೆ ಒಂದು ದಿವಸ ವಿರಾಮ ನೀಡಿ ಮುಂದುವರೆಸುತ್ತಿದ್ದು 2005 ರಿಂದ ಸುಮಾರು 20 ವರ್ಷಗಳವರೆಗೆ ಈ ಪದ್ಧತಿ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಏಕಾಏಕಿ ಕೇವಲ 15 ದಿವಸ ವಿಸ್ತರಣೆ ನೀಡಿ, ತದನಂತರ ಒಂದು ತಿಂಗಳು ವಿಸ್ತರಣೆ ನೀಡಿ ಆಮೇಲೆ ಮೂರು ತಿಂಗಳ ವಿಸ್ತರಣೆ ನೀಡಿ ತದನಂತರ ಸಿಬ್ಬಂದಿಗಳಿಗೆ ಕರ್ತವ್ಯದಿಂದ ವಿಮುಕ್ತಿಗೊಳಿಸುವ ಆದೇಶ ನೀಡಿದ್ದು ನಮ್ಮ ಸಂಘಟನೆಯಿಂದ ಕೋರ್ಟ್ ನಲ್ಲಿ ದಾವೆ ಹೂಡಿದ್ದು ಇದೆ, ಕಳೆದ 8 ತಿಂಗಳಲ್ಲಿ ವೇತನ ಪಡೆಯಲು ಸರಿಯಾಗಿ ಅನುದಾನ ಬಿಡುಗಡೆ ಆಗದೇ ಸಿಬ್ಬಂದಿಗಳು ಪರದಾಡುವಂತಾಗಿದೆ. ಈ ಬಗ್ಗೆ ಸದನದಲ್ಲಿ ಗಮನ ಸೆಳೆದು ನಮಗೆ ನ್ಯಾಯ ಕೊಡಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್, ಸುನೀಲ್, ಸುರೇಶ್, ಮಹಾಲಿಂಗಪ್ಪ, ಬಸವರಾಜ್, ದೊಡ್ಡಮನಿ, ಡಾ.ರೇಣುಕಾ, ಇನ್ನಿತರರಿದ್ದರು.”
- ಪ್ರಧಾನ ಕಾರ್ಯದರ್ಶಿಗಳ ಆದೇಶ ರದ್ದುಗೊಳಿಸಲು ಎನ್ ಎಚ್ ಎಂ ಸಿಬ್ಬಂದಿಗಳು ಆಗ್ರಹ
- ಈ ಬಗ್ಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ಸಿಬ್ಬಂದಿಗಳ ಮನವಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ
ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ ಶಿವಕುಮಾರ್ ಅವರು ಇಮ್ಮಡಿ ಪುಲ್ಲಕೇಶಿ ಸಾಮ್ರಾಟ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ನಂತರ ಜಿಲ್ಲಾಧ್ಯಕ್ಷರಾದ ಶಿವರತನ್ ಮಾತನಾಡಿ ,ನಾಡಿನ ಇತಿಹಾಸ ಪುಟಗಳಲ್ಲಿ ಕಣ್ಮರೆಯಾಗಿರುವ ಕನ್ನಡದ ಶ್ರೇಷ್ಠ ಸಾಮ್ರಾಟರಲ್ಲಿ ಇಮ್ಮಡಿ ಪುಲಿಕೇಶಿ ಅಗ್ರ ಸ್ಥಾನ ಪಡೆದಿದ್ದಾರೆ. ಇಂತಹ ಮಹಾನ್ ಸಾಮ್ರಾಟರನ್ನ ನೆನಪಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿಯನ್ನು ನಾವೆಲ್ಲರೂ ಹೊರಬೇಕಾಗಿದೆ ಎಂದರು.
ಭಾರತೀಯ ನೌಕಾಪಡೆಯ ಪಿತಾಮಹ ಎಂದೇ ಕರೆಯಲಾಗುವ ಇಮ್ಮಡಿ ಪುಲಿಕೇಶಿ ಸಾಮ್ರಾಟರ ಜನ್ಮದಿನದ ಪ್ರಯುಕ್ತ ಭಾರತೀಯ ನೌಕಾಪಡೆ ದಿನಾಚರಣೆಯೆoದು ಆಚರಿಸುವುದು ಕನ್ನಡಿಗರಿಗೆ ಹೆಮ್ಮೆಯ ವಿಚಾರ.
ಬೇರೆಲ್ಲ ಜಯಂತಿಗಳನ್ನು ಆಚರಿಸುವ ಸರ್ಕಾರಗಳು ಇಮ್ಮಡಿ ಪುಲಿಕೇಶಿ ಜಯಂತಿಯನ್ನು ಕಡ್ಡಾಯವಾಗಿ ಎಲ್ಲೆಡೆ ಆಚರಿಸಲು ಆಡಳಿತಾತ್ಮಕವಾಗಿ ಜಾರಿಗೊಳಿಸಲು ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.
ಮಹಿಳಾ ಅಧ್ಯಕ್ಷೆ ಶುಭಮಂಗಳ ಅವರು ಸಿಹಿ ವಿತರಿಸಿದರು. ಕನ್ನಡ ಚಳವಳಿಯ ಹಿರಿಯ ಹೋರಾಟಗಾರರು , ಕನ್ನಡ ಚಳವಳಿಯ ಮಾಜಿ ಅಧ್ಯಕ್ಷರಾದ ಬಂಕಾಪುರ ಚನ್ನಬಸಪ್ಪ, ದಾ.ಹ. ಶಿವಕುಮಾರ್. ಈಶ್ವರ್. ಪ್ರಕಾಶ್. ವಾರ್ತಾ ಇಲಾಖೆ ನಿವೃತ್ತ ಬಿ.ಎಸ್. ಬಸವರಾಜ್ ಹಾಗೂ ಹಲವಾರು ಕನ್ನಡಪರ ಹೋರಾಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಯನ್ನು ಉಪನಿರ್ದೇಶಕರು ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಾವಣಗೆರೆ ಪಡೆದು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 24 ರೊಳಗಾಗಿ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯ ರಸ್ತೆ, ಕುವೆಂಪುನಗರ, ಎಂ.ಸಿ.ಸಿ, ‘ಬಿ’ ಬ್ಲಾಕ್, ದಾವಣಗೆರೆ ದೂ.ಸಂ:08192-264056 ಸಲ್ಲಿಸಬೇಕೆಂದು ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoದುಡಿಯುವ ವರ್ಗಕ್ಕೆ ಸ್ಥಳದಲ್ಲೇ ಉಚಿತ ಚಿಕಿತ್ಸೆ : ಶಾಸಕ ಕೆ.ಎಸ್.ಬಸವಂತಪ್ಪ ‘ಸಂಚಾರಿ ಆರೋಗ್ಯ ಘಟಕ’ಕ್ಕೆ ಚಾಲನೆ
-
ದಿನದ ಸುದ್ದಿ5 days agoಜಿಎಂ ವಿಶ್ವವಿದ್ಯಾಲಯ ರಂಗೋತ್ಸವ -2025 | ವಿದ್ಯಾರ್ಥಿಗಳ ಪ್ರತಿಭೆ ಅನಾವರಣ : ಸ್ಪರ್ಧೆಯಲ್ಲಿ ರಂಗ ಪ್ರೇಮ, ನಟನಾ ಚತುರತೆ ಬೆರಗು
-
ದಿನದ ಸುದ್ದಿ5 days agoಉಳಿಕೆ ಸರ್ಕಾರಿ ನಿವೇಶನ ಇಲಾಖೆಗಳ ವಿವಿಧ ಉದ್ದೇಶಿತ ಕಟ್ಟಡಗಳಿಗೆ ಹಂಚಿಕೆ: ಡಿಸಿ ಜಿ.ಎಂ.ಗಂಗಾಧರಸ್ವಾಮಿ
-
ದಿನದ ಸುದ್ದಿ5 days agoಸಹಾಯಧನಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ1 day agoಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
-
ದಿನದ ಸುದ್ದಿ3 days agoದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ1 day agoದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

