ದಿನದ ಸುದ್ದಿ
ಈ ಕ್ಷಣದ ಪ್ರಮುಖ ಸುದ್ದಿಗಳು
ಈ ಕ್ಷಣದ ಪ್ರಮುಖ ಸುದ್ದಿಗಳು
- ಇಂದು ಕಾರ್ಮಿಕರ ದಿನ. ಇದರ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶ್ರಮಿಕ ವರ್ಗಕ್ಕೆ ಶುಭಾಶಯ ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ನಾಡಿನ ಸಮಸ್ತ ದುಡಿಯುವ ವರ್ಗಕ್ಕೆ, ಕಠಿಣ ಪರಿಶ್ರಮ ಮತ್ತು ಬದ್ಧತೆಯಿಂದ ಕಾರ್ಯ ನಿರ್ವಹಿಸಿ, ದೇಶದ ಪ್ರಗತಿಗೆ ತಮ್ಮದೇ ಆದ ಕೊಡುಗೆ ನೀಡುತ್ತಿರುವ ಎಲ್ಲಾ ಶ್ರಮಜೀವಿ ಕಾರ್ಮಿಕರಿಗೆ ಶುಭಾಶಯಗಳು ಎಂದು ತಿಳಿಸಿದ್ದಾರೆ.
- ಇದೇ ತಿಂಗಳ 10 ರಂದು ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ಚುನಾವಣಾ ಪ್ರಚಾರ ತೀವ್ರಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಂದು ಸುತ್ತಿನ ಪ್ರಚಾರದ ನೇತೃತ್ವ ವಹಿಸಲು ಮತ್ತೆ ರಾಜ್ಯಕ್ಕೆ ಮರಳಲಿದ್ದಾರೆ. ಕಾಂಗ್ರೆಸ್, ಜೆಡಿಎಸ್ ಹಾಗೂ ಇತರ ಪಕ್ಷಗಳು ಸಹ ಮೇ 10 ರ ಚುನಾವಣೆಗೆ ಬಿರುಸಿನ ಪ್ರಚಾರ ನಡೆಸುತ್ತಿವೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತುಮಕೂರು, ಹಾಸನ ಮತ್ತು ಚಾಮರಾಜನಗರದಲ್ಲಿ ಸಾರ್ವಜನಿಕ ಸಭೆಗಳನ್ನುದ್ದೇಶಿಸಿ ಮಾತನಾಡಲಿದ್ದಾರೆ.
- ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬೆಂಗಳೂರಿಗೆ ಆಗಮಿಸಲಿದ್ದು, ಚಾಮರಾಜನಗರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೆಂಗಳೂರಿನ ವಿವಿಧ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಇಂದು ಮಂಗಳೂರಿಗೆ ಭೇಟಿ ನೀಡುತ್ತಿದ್ದಾರೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಬೆಂಗಳೂರಿನ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ರೋಡ್ ಶೋ ನಡೆಸಲಿದ್ದಾರೆ.
- ಮೇ ತಿಂಗಳ ಮೊದಲ ದಿನವೇ ತೈಲ ಕಂಪನಿಗಳು ಗ್ರಾಹಕರಿಗೆ ಸಿಹಿ ನೀಡಿವೆ. ಇಂದಿನಿಂದ ವಾಣಿಜ್ಯ ಬಳಕೆಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 172ರೂಪಾಯಿ ತಗ್ಗಿಸಲಾಗಿದೆ. ವಾಣಿಜ್ಯ ಅನಿಲ ಸಿಲಿಂಡರ್ ಗಳ ಬೆಲೆ ಕಡಿತಗೊಂಡಿರುವ ಹಿನ್ನೆಲೆಯಲ್ಲಿ ಜೆಟ್ ಇಂಧನ ಬೆಲೆಯು ಕಡಿತವಾಗಲಿದೆ.
- ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್, ಇಂದಿನಿಂದ ಮೂರು ದಿನಗಳ ಕಾಲ ಮಾಲ್ಡೀವ್ಸ್ಗೆ ಭೇಟಿ ನೀಡಲಿದ್ದಾರೆ. ಉಭಯ ದೇಶಗಳ ನಡುವಿನ ರಕ್ಷಣಾ ಬಾಂಧವ್ಯಗಳ ಕುರಿತಂತೆ ರಾಜ್ನಾಥ್ ಸಿಂಗ್ ಅವರು ಮಾಲ್ಡೀವ್ಸ್ ರಕ್ಷಣಾ ಸಚಿವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.
- ಲಖನೌದಲ್ಲಿ ಇಂದು ರಾತ್ರಿ 7.30ಕ್ಕೆ ಆರಂಭವಾಗಲಿರುವ ಐಪಿಎಲ್ ಕ್ರಿಕೆಟ್ ಪಂದ್ಯದಲ್ಲಿ ಲಖನೌ ಸೂಪರ್ ಜಯಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243