ದಿನದ ಸುದ್ದಿ
ಅಖಿಲ ಭಾರತ ವೀರಶೈವ -ಲಿಂಗಾಯತ ಮಹಾಸಭಾದಿಂದ ಮೇ 26 ರಂದು ಬಸವ ಜಯಂತಿ – ಪ್ರತಿಭಾ ಪುರಸ್ಕಾರ
ಸುದ್ದಿದಿನ,ದಾವಣಗೆರೆ: ಅಖಿಲ ಭಾರತ ವೀರಶೈವ -ಲಿಂಗಾಯತ ಮಹಾಸಭಾ ಜಿಲ್ಲಾಘಟಕದ ವತಿಯಿಂದ ಮೇ 26ರಂದು ಸಂಜೆ 4ಕ್ಕೆ ನಗರದ ಬಿಐಇಟಿ ಕಾಲೇಜು ಆವರಣದಲ್ಲಿರುವ ಎಸ್.ಎಸ್.ಮಲ್ಲಿಕಾರ್ಜುನ ಸಾಂಸ್ಕೃತಿಕ ಕೇಂದ್ರದಲ್ಲಿ ಬಸವ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ ಎಂದು ಮಹಾಸಭಾದ ಜಿಲ್ಲಾಧ್ಯಕ್ಷ ದೇವರಮನೆ ಶಿವಕುಮಾರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಸಕ ಶಾಮನೂರು ಶಿವಶಂಕರಪ್ಪ ಸಮಾರಂಭದ ಉದ್ಘಾಟನೆ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಎಸ್.ಎಸ್.ಪಾಟೀಲ್ ಆಗಮಿಸಲಿದ್ದಾರೆ. ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷರಾದ ಅಥಣಿ ವೀರಣ್ಣ, ಅಣಬೇರು ರಾಜಣ್ಣ, ಎಸ್.ಎಸ್.ಗಣೇಶ್ ಉಪಸ್ಥಿತರಿದ್ದು,ದೇವರಮನೆ ಶಿವಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಸಮಾರಂಭದಲ್ಲಿ ಬಸವತತ್ವ ಅನುಷ್ಠಾನದ ದಾರಿಗಳು ಕುರಿತು ಷಹಪುರದ ಬಸವ ಮಾರ್ಗದ ಸಂಪಾದಕ ವಿಶ್ವಾರಾಧ್ಯ ಸತ್ಯಂಪೇಟೆ ವಿಷಯ ಮಂಡನೆ ಮಾಡಲಿದ್ದಾರೆ. ಯುಪಿಎಸ್ ಇ ಎಐಆರ್ ನಲ್ಲಿ 101ನೇ ರ್ಯಾಂಕ್ ಪಡೆದ ಸೌಭಾಗ್ಯ ಎಸ್ ಬೀಳಗಿಮಠ, ಎಸ್ ಎಸ್ ಎಲ್ ಸಿಯಲ್ಲಿ ರಾಜ್ಯಕ್ಕೆ ಮೊದಲ ರ್ಯಾಂಕ್ ಪಡೆದ ಅಂಕಿತ ಬಸಪ್ಪ, ಜಿಲ್ಲೆಗೆ ಮೊದಲ ಸ್ಥಾನಪಡೆದ ಹೆಚ್.ಜಿ ಗಾನವಿ ಅವರಿಗೆ ಅಭಿನಂದನೆ ಸಲ್ಲಿಸಲಾಗುವುದು ಎಂದು ಮಾಹಿತಿ ನೀಡಿದರು.
ಇದೇ ವೇಳೆ 2021-22 ಹಾಗೂ 2022-23 ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಅತ್ಯಧಿಕ ಅಂಕಗಳಿಸಿದ ಸುಮಾರು 500 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರದೊಂದಿಗೆ ಸನ್ಮಾನಿಸಲಾಗುವುದು ಎಂದರು.
ಇದೇ ವೇಳೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ 24ನೇ ಮಹಾ ಅಧಿವೇಶನದ ಯಶಸ್ಸಿಗೆ ಶ್ರಮಿಸಿದ ಕಾರ್ಯಕರ್ತರಿಗೆ ಗೌರವ ಸಮರ್ಪಣೆ ಮಾಡಲಾಗುವುದು. ಸಮಾರಂಭದಲ್ಲಿ ಶ್ರೀ ಸಿದ್ದರಾಮ ಕೇಸಾಪುರ ಮತ್ತು ತಂಡ,ಕಲರವ ಸಾಂಸ್ಕೃತಿಕ ವೇದಿಕೆ ಬೆಂಗಳೂರು ಹಾಗೂ ಕದಳಿವೇದಿಕೆ ವತಿಯಿಂದ ವಚನಗೀತೆ ನಡೆಯಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಅಣಬೇರು ರಾಜಣ್ಣ, ಬಿ.ಜೆ.ರಮೇಶ್, ಐಗೂರು ಚಂದ್ರಶೇಖರ್, ಪ್ರಕಾಶ್ ಪಾಟೀಲ್, ಶುಭ ಐನಳ್ಳಿ, ಶಿವಕುಮಾರ್ ಕೊರಟಗೆರೆ, ಸುನೀಲ್ ಬಾಗೇವಾಡಿ, ನಿಧಿ ಐನಮಹಾಸಭಾದಳ್ಳಿ ಇತರರು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243