ಕ್ರೀಡೆ
ಬೆಳಗಿನ ಪ್ರಮುಖ ಸುದ್ದಿಗಳು
ಬೆಳಗಿನ ಪ್ರಮುಖ ಸುದ್ದಿಗಳು
- ರಾಜ್ಯಸಭೆಯ ದ್ವೈವಾರ್ಷಿಕ ಚುನಾವಣೆಯಲ್ಲಿ 41 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿದಂತೆ 4 ರಾಜ್ಯಗಳ 16 ಸ್ಥಾನಗಳಿಗೆ ಇಂದು ಚುನಾವಣೆ ನಡೆಯಲಿದೆ. ಕರ್ನಾಟಕದ ೪ ಸ್ಥಾನಗಳಿಗೆ ಬಿಜೆಪಿಯಿಂದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ನಟ ಜಗ್ಗೇಶ್ ಮತ್ತು ಲೆಹರ್ ಸಿಂಗ್, ಕಾಂಗ್ರೆಸ್ನಿಂದ ಜಯರಾಮ್ ರಮೇಶ್ ಮತ್ತು ಮನ್ಸೂರ್ ಅಲಿಖಾನ್ ಹಾಗೂ ಜೆಡಿಎಸ್ನಿಂದ ಕುಪೇಂದ್ರ ರೆಡ್ಡಿ ಸೇರಿದಂತೆ ಒಟ್ಟು 6 ಅಭ್ಯರ್ಥಿಗಳು ಕಣದಲಿದ್ದಾರೆ. ವಿಧಾನಸಭೆಯ ಸದಸ್ಯರ ಸಂಖ್ಯಾ ಬಲದ ಆಧಾರದ ಮೇಲೆ ಬಿಜೆಪಿಯಿಂದ ಇಬ್ಬರು ಹಾಗೂ ಕಾಂಗ್ರೆಸ್ ನಿಂದ ಓರ್ವ ಅಭ್ಯರ್ಥಿ ನಿರಾಯಾಸವಾಗಿ ಗೆಲ್ಲುವ ಅವಕಾಶವಿದೆ. ನಾಲ್ಕನೇ ಅಭ್ಯರ್ಥಿ ಫಲಿತಾಂಶ ಕುತೂಹಲ ಮೂಡಿಸಿದೆ.
- ಭತ್ತ, ಜೋಳ, ರಾಗಿ ದ್ವಿದಳ ಧಾನ್ಯಗಳು ಸೇರಿದಂತೆ ೧೪ ಕೃಷಿ ಉತ್ಪನ್ನಗಳಿಗೆ ಕೇಂದ್ರ ಸರ್ಕಾರ 2022-23ನೇ ಸಾಲಿಗಾಗಿ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಿದೆ. ಬೇಸಾಯದ ಪ್ರದೇಶವನ್ನು ವಿಸ್ತರಿಸಲು ಹಾಗೂ ವಿವಿಧ ಬೆಳೆಗಳನ್ನು ಬೆಳೆಯಲು ರೈತರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಕೃಷಿ ಸಚಿವ ಬಿ. ಸಿ. ಪಾಟೀಲ್ ಹಾವೇರಿ ಜಿಲ್ಲೆ ಹಿರೇಕೆರೂರಿನಲ್ಲಿ ಹೇಳಿದ್ದಾರೆ.
- ಮಂಗಳೂರು ಹೊರವಲಯದ ಪಿಲಿಕುಳ ನಿಸರ್ಗಧಾಮದಲ್ಲಿ ನಾಳೆ(11) ಮತ್ತು ನಾಡಿದ್ದು(12) ಹಣ್ಣುಗಳ ಉತ್ಸವ ಹಾಗೂ ಹಲಸು ಮೇಳ ಆಯೋಜಿಸಲಾಗಿದೆ. ಪ್ರಾದೇಶಿಕ ಹಾಗೂ ಇತರೆ ರಾಜ್ಯಗಳ ವಿವಿಧ ತಳಿಯ ಹಣ್ಣುಗಳೊಂದಿಗೆ ಔಷಧೀಯ ಗಿಡಗಳು, ಕಸಿ ಗಿಡಗಳು, ಬೀಜಗಳು, ಸಾವಯವ ಬಳಗದ ವಿವಿಧ ಆಹಾರ ಪದಾರ್ಥಗಳು ಹಾಗೂ ಹಣ್ಣುಗಳಿಂದ ತಯಾರಿಸಿದ ಖಾದ್ಯ, ಪಾನೀಯಗಳನ್ನು ಬೆಳೆಗಾರರೇ ತಂದು ಮಾರಾಟ ಮಾಡಲಿದ್ದಾರೆ.
- ದೇಶದ 16ನೇ ರಾಷ್ಟ್ರಪತಿ ಆಯ್ಕೆಗಾಗಿ ಜುಲೈ 18ರಂದು ಚುನಾವಣೆ ನಡೆಯಲಿದೆ. ದೆಹಲಿಯಲ್ಲಿ ನಿನ್ನೆ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಇದೇ ಜೂನ್ 15ರಂದು ಅಧಿಸೂಚನೆ ಪ್ರಕಟವಾಗಲಿದ್ದು, ನಾಮಪತ್ರ ಸಲ್ಲಿಕೆಗೆ ಇದೇ 29ರಂದು ಕಡೆಯ ದಿನ ಎಂದರು. ಜುಲೈ ೨೧ರಂದು ಮತ ಎಣಿಕೆ ನಡೆಯಲಿದೆ.
- ಎರಡು ದಿನಗಳ ವಿಶೇಷ ಆಸಿಯಾನ್-ಭಾರತ ವಿದೇಶಾಂಗ ಸಚಿವರ ಸಮಾವೇಶ ಇದೇ 16ರಂದು ದೆಹಲಿಯಲ್ಲಿ ಆರಂಭಗೊಳ್ಳಲಿದೆ. ಇದೇ ಪ್ರಥಮ ಬಾರಿಗೆ ಭಾರತ ಈ ಸಮಾವೇಶ ಆಯೋಜಿಸಿದ್ದು, ಇದರೊಂದಿಗೆ ದೆಹಲಿ ಮಾತುಕತೆಯ 12ನೇ ಆವೃತ್ತಿ ಸಹ ನಡೆಯಲಿದೆ ಎಂದು ವಿದೇಶಾಂಗ ವಕ್ತಾರ ಅರಿಂದಮ್ ಬಾಗ್ಚಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243