Connect with us

ದಿನದ ಸುದ್ದಿ

ಮಿಡತೆ ದಾಳಿಯ ಪೂರ್ವಾಪರ : ಅದೂ ಯಾಕೊ ಕೊರೊನಾ ಥರಾ..!

Published

on

ರಾಜಸ್ಥಾನ ರಾಜ್ಯದ ರಾಜಧಾನಿ ಜೈಪುರದಲ್ಲಿ ಮಾವಿನ ಮರದಿಂದ ಮಿಡತೆಗಳ ಹಿಂಡುಗಳನ್ನು ತಪ್ಪಿಸಲು ನಿವಾಸಿಯೊಬ್ಬರು ಪ್ರಯತ್ನಿಸುತ್ತಿರುವುದು. [ವಿಶಾಲ್ ಭಟ್ನಾಗರ್ / ಎಎಫ್‌ಪಿ]
  • ನಾಗೇಶ್ ಹೆಗಡೆ

ತ್ತ ಪೂರ್ವಭಾರತದಲ್ಲಿ ಅಂಫನ್ ದಾಳಿ, ಇತ್ತ ದಿಲ್ಲಿಯ ಸುತ್ತ ಬಿಸಿಗಾಳಿಯ ದಾಳಿ, ಈಕಡೆ ಪಶ್ಚಿಮ ಭಾರತದಲ್ಲಿ ಮಿಡತೆ ದಾಳಿ. ಕೊರೊನಾ ಸಂದರ್ಭದಲ್ಲೇ ಬಂದೊದಗಿದ ಮಿಡತೆ ದಾಳಿ ಅದೆಷ್ಟು ರೀತಿಯಲ್ಲಿ ಕೊರೊನಾವನ್ನೇ ಹೋಲುತ್ತಿದೆ! ಯೋಗಾಸನದಲ್ಲಿ ಮಿಡತೆಯನ್ನು ಹೋಲುವ ‘ಶಲಭಾಸನ’ವೂ ಅದೇನನ್ನೋ ಸಂಕೇತಿಸುತ್ತಿದೆಯಲ್ಲ? ಮಿಡತೆ () ದಾಳಿ ಹೇಗಿರುತ್ತದೆ ಎಂಬುದನ್ನು ಅಕ್ಷರಗಳಲ್ಲಿ ಹಿಡಿಯೋಣ ಬನ್ನಿ.

ಮೋಡದ ವಿಶಾಲ ಚಾಪೆಯೊಂದು ಆಕಾಶದಲ್ಲಿ ತೇಲಿ ಬಂದಂತೆ ಕಾಣುತ್ತದೆ. ಅದೆಷ್ಟೊ ಕೋಟಿ ಮಿಡತೆಗಳು ಗಾಳಿಯಲ್ಲಿ ತೇಲಿ ಬರುವಾಗ ನೆಲಕ್ಕೆ ಕತ್ತಲು ಕವಿಯುತ್ತದೆ. ಹಾರಿ ಸುಸ್ತಾದ ಮರಿಮಿಡತೆ, ಮುದಿಮಿಡತೆಗಳು ನೆಲಕ್ಕಿಳಿಯುವಾಗ ಜಡಿಮಳೆ ಸುರಿದಂತಾಗುತ್ತದೆ.

ಅವು ಪೈರು, ಪೊದೆ, ಗಿಡಮರಗಳ ಮೇಲೆ ಕೂರಲು ತೊಡಗಿದರೆ ಹಸುರೆಲ್ಲ ಮುಚ್ಚಿಹೋಗಿ ಇಡೀ ಬೆಟ್ಟ ಕಂದುಬಣ್ಣಕ್ಕೆ ತಿರುಗುತ್ತದೆ. ಮಿಡತೆಗಳ ಭಾರಕ್ಕೆ ಗಿಡಗಳು ನೆಲಕ್ಕೆ ಬಾಗುತ್ತವೆ. ದೊಡ್ಡ ಮರಗಳ ಕೊಂಬೆಗಳೂ ಮುರಿದು ಬೀಳುತ್ತವೆ. ಅಷ್ಟೇಕೆ ಸಡಿಲ ಬೇರುಗಳ ಇಡೀ ಮರವೇ ನೆಲಕ್ಕೊರಗುತ್ತದೆ. ಬಿರುಗಾಳಿ ಹೆಪ್ಪುಗಟ್ಟಿದಂತೆ ಕಾಣುತ್ತದೆ.

ನೋಡನೋಡುತ್ತ ಗಿಡಗಳ ಮೇಲೆ ಕೂತು ಅವು ಮೂತಿಯನ್ನು ಒತ್ತಿ ಹಸುರನ್ನೂ ಕೆರೆಯತೊಡಗಿದರೆ ಮತ್ತೆ ಜಡಿಮಳೆಯ ಜರಜರ ಸದ್ದೇ ಬರುತ್ತಿರುತ್ತದೆ. ಎಲೆ, ಹೂವು, ಕಾಯಿ ಕೊನೆಗೆ ಹಸುರು ತೊಗಟೆಯನ್ನೂ ಮುಕ್ಕಿ ಅವು ಮೇಲಕ್ಕೆ ನೆಗೆದರೆ ನೆಲದ ಚಿತ್ರಣ ಬದಲಾಗುತ್ತದೆ. ಪೈರು-ಪೊದೆ-ಗಿಡ-ಮರಗಳೆಲ್ಲ ಒಣ ಪೊರಕೆಗಳಾಗುತ್ತವೆ. ಹಸುರನ್ನು ಆಧರಿಸಿದ ಇತರ ಜೀವಿಗಳ ಪರಿಸ್ಥಿತಿಯನ್ನು ಕೇಳುವುದೇ ಬೇಡ.
ಮಿಡತೆ ದಾಳಿಯ ಭಯಾನಕತೆ ಹೇಗಿರುತ್ತದೆ ಎಂಬುದು ಮಹಾತ್ಮಾ ಗಾಂಧಿಯವರಿಗೂ ಗೊತ್ತಿತ್ತು: ‘”ಭಾರತದ 30 ಕೋಟಿ ಪ್ರಜೆಗಳು ಬ್ರಿಟಿಷರ ಹಾಗೆ ಐಷಾರಾಮಿ ಜೀವನವನ್ನು ಬಯಸಿದರೆ ಇಡೀ ಪ್ರಪಂಚವೇ ಮಿಡತೆ ದಾಳಿಗೆ ತುತ್ತಾದಂತೆ ಬೋಳು ಬಯಲಾದೀತು” ಎಂದು ಅವರು ಎಚ್ಚರಿಸಿದ್ದರು.

ಮಿಡತೆಗಳ ಈ ದುರ್ದಾಳಿಯ ವಿವರಗಳು ವೇದದಲ್ಲೂ ಇವೆ, ಬೈಬಲ್ಲಿನಲ್ಲೂ ಇವೆ, ಕುರಾನ್ನಲ್ಲೂ ಇವೆ. ಅದನ್ನು ಆಮೇಲೆ ನೋಡೋಣ. ಈಗ ವಿಜ್ಞಾನಿಗಳು ಕಂಡ ಕೆಲವು ಸ್ವಾರಸ್ಯ ಇಲ್ಲಿದೆ:

ಸಾಮಾನ್ಯ ದಿನಗಳಲ್ಲಿ ಮರುಭೂಮಿಯ ಕುರುಚಲು ಪೊದೆಗಳಲ್ಲಿ ಅಲ್ಲೊಂದು ಇಲ್ಲೊಂದು ಮಿಡತೆ ತನ್ನ ಪಾಡಿಗೆ ತಾನಿರುತ್ತದೆ. ಆದರೆ ಒಣಹವೆ, ಸೆಕೆದಿನಗಳು ಹೆಚ್ಚಾದ ಹಾಗೆ, ತಿನ್ನಲು ಏನೂ ಇಲ್ಲದ ಪರಿಸ್ಥಿತಿ ಬಂತೆಂದರೆ ನೋಡಿ. ಬದುಕುಳಿಯುವ ಒಂದು ವಿಲಕ್ಷಣ ವಿಕಾಸ ಸೂತ್ರ ಆಗ ಜಾರಿಗೆ ಬರುತ್ತದೆ.

ಬದುಕಿಗೆ ಸಂಕಷ್ಟ ಬಂದಾಗ ಒಂಟೊಂಟಿ ಮಿಡತೆಗಳ ಮಿದುಳಿನಲ್ಲಿ ಸೆರೊಟೊನಿನ್ ಎಂಬ ರಸ ಉಕ್ಕುತ್ತದೆ. ಅದುವರೆಗೆ ಒಂಟಿಯಾಗಿ ಬದುಕುತ್ತಿದ್ದ ನೂರಾರು ಮಿಡತೆಗಳು ಗುಂಪಾಗಿ ಸೇರತೊಡಗುತ್ತವೆ. ಏನೋ ಸಿಗ್ನಲ್ ಸಿಕ್ಕಂತೆ ಒಟ್ಟಿಗೆ ನೆಗೆಯುತ್ತವೆ.

ಆಗಸ್ಟ್ 15ರ ಬೆಳಿಗ್ಗೆ ಎಲ್ಲ ಮನೆಗಳ ಒಂಟೊಂಟಿ ಮಕ್ಕಳೂ ಶಾಲೆಗೆ ಜಮಾಯಿಸಿ ಜನಗಣ ಮನ ಹಾಡುತ್ತ ಪ್ರಭಾತಫೇರಿಗೆ ಹೊರಡುವ ಹಾಗೆ.
ಅಥವಾ ಯಾರೋ ಕಿಂದರಜೋಗಿಯೊಬ್ಬ ತುತ್ತೂರಿ ಊದಿ ಎಲ್ಲ ಮಿಡತೆಗಳನ್ನೂ ಎಬ್ಬಿಸಿ ಹೊರಡಿಸಿದ ಹಾಗೆ.

(ಗೆದ್ದಲುಗಳಲ್ಲೂ ಇಂಥ ವೈಚಿತ್ರ್ಯ ಸಂಭವಿಸುತ್ತದೆ. ಚುನಾವಣೆಯಲ್ಲಿ ಟಿಕೆಟ್ ಸಿಗದ ನಾಯಕನ ಹಾಗೆ ಒಂಟಿ ಗೆದ್ದಲುಗಳು ಮುಖಮುಚ್ಚಿಕೊಂಡು ಅಲ್ಲಿ ಇಲ್ಲಿ ಗೊತ್ತುಗುರಿ ಇಲ್ಲದೆ ಅಂಡಲೆಯುತ್ತವೆ; ಇಲ್ಲವೆ ಮೂಲೆ ಹಿಡಿದು ಕೂತಿರುತ್ತವೆ. ಅದೇನು ಹೈಕಮಾಂಡ್ ನಿರ್ದೇಶನ ಬಂದರೆ ತಗಾ, ಸಖತ್ ಸಂಘಟನೆಯಾಗಿ, ಚಕಚಕನೆ ಹುತ್ತ ಕಟ್ಟುವುದೇನು, ಆಹಾರಕ್ಕೆ ಧಾವಿಸುವುದೇನು, ರಾಜರಾಣಿಯರಿಗೆ ಪಟ್ಟ ಕಟ್ಟುವುದೇನು, ಮೊಟ್ಟೆ ಮರಿಗಳ ಪೋಷಣೆ ಮಾಡುವುದೇನು…)

ಮಿಡತೆಗಳು ದಾಳಿ ಮಾಡಿದಲ್ಲಿ ಬರಗಾಲ ಬರುತ್ತದೊ ಅಥವಾ ಬರಗಾಲ ಬರುವಂಥ ಸ್ಥಿತಿಗಾಗಿ ಅವು ಕಾದು ಕೂತಿರುತ್ತವೊ -ಅಂತೂ ಆಫ್ರಿಕ, ಮೊಂಗೋಲಿಯಾ, ಆಸ್ಟ್ರೇಲಿಯಾ ಮತ್ತು ಮಧ್ಯಪ್ರಾಚ್ಯಗಳ ಬರಗೆಟ್ಟ ಭೂಮಿಗಳ ಅಂಚಿನ ಹೊಲಗಳಿಗೆ ಮಿಡತೆದಾಳಿ ಆಗಾಗ ಆಗುತ್ತಿರುತ್ತದೆ. ಇರಾನ್, ಇರಾಕ್ ಅಫ್ಘಾನಿಸ್ತಾನ್, ಕಿರ್ಗಿಸ್ತಾನ, ಪಾಕಿಸ್ತಾನ ದಾಟಿ ಅವು ನಮ್ಮಲ್ಲೂ ರಾಜಸ್ತಾನ್, ಗುಜರಾತಿನ ಕಚ್ಛದ ಮರುಭೂಮಿಗಳಲ್ಲಿ ಚಿಕ್ಕಪುಟ್ಟ ತುಕಡಿ ಕಟ್ಟಿಕೊಂಡು ಪ್ರತಿವರ್ಷ ಅಲ್ಲಿಷ್ಟು ಇಲ್ಲಿಷ್ಟು ಹಾವಳಿ ಎಬ್ಬಿಸುತ್ತವೆ. ಎಲ್ಲೋ ಕೆಲವು ದಶಕಗಳಿಗೊಮ್ಮೆ ಅವು ಪ್ಲೇಗ್, ಸಿಡುಬು, ಕೊರೊನಾ ಥರಾ ವ್ಯಾಪಕ ದಾಳಿಗೆ ಹೊರಡುತ್ತವೆ.

ಆಫ್ರಿಕದಲ್ಲಿ ಇದರ ಹಾವಳಿ ತುಸು ಪದೇ ಪದೇ ಕಂಡು ಬರುತ್ತಿರುತ್ತದೆ. ನೈಜೀರಿಯಾದ ಸಾಹಿತಿ ಚಿನುವಾ ಅಚಿಬೆ ಬರೆದ “ಥಿಂಗ್ಸ್ ಫಾಲ್ ಅಪಾರ್ಟ್’ ಕಾದಂಬರಿಯಲ್ಲಿ ಇದರ ಪ್ರಸ್ತಾಪ ಬರುತ್ತದೆ. ಐರೋಪ್ಯ ಕ್ರಿಶ್ಚಿಯನ್ ಮಿಶನರಿಗಳು ಆಫ್ರಿಕದ ಹಳ್ಳಿಗಳನ್ನು ಹೇಗೆ ಆಕ್ರಮಿಸಿದರು ಎಂಬುದನ್ನು ವರ್ಣಿಸಲು ಆತ ಈ ಕೀಟಗಳ ರೂಪಕವನ್ನು ಬಳಸಿಕೊಳ್ಳುತ್ತಾನೆ. ಮಿಡತೆಗಳ ಸೈನ್ಯ ಬಂತೆಂದರೆ ಹಳ್ಳಿಯ ಪ್ರತಿ ಗಿಡ, ಪೊದೆ, ಹುಲ್ಲೆಸಳ ಮೇಲೂ ಅವು ಕೂರುತ್ತವೆ. ಅವನ್ನು ಹೇಗೆ ಎದುರಿಸಬೇಕು ಎಂಬುದು ಹಳ್ಳಿಯ ಮುಗ್ಧರಿಗೆ ಗೊತ್ತಾಗುವುದಿಲ್ಲ. ಎದುರಿಸಬೇಕೆ ಬೇಡವೆ ಎಂಬುದೂ ಅವರಿಗೆ ಸ್ಪಷ್ಟವಿರುವುದಿಲ್ಲ. ಏಕೆಂದರೆ ಅವು ಹಸಿವೆಗೆ ಕಾರಣವೂ ಹೌದು, ಹಸಿವೆಗೆ ಪರಿಹಾರವೂ ಹೌದು (ಏಕೆಂದರೆ ಅಲ್ಲಿಯ ಜನರು ಮಿಡತೆಗಳನ್ನು ಹುರಿದು ತಿನ್ನುತ್ತಾರೆ.).

ಬೈಬಲ್ಲಿನಲ್ಲಿ ಮಿಡತೆದಾಳಿಯ ಪ್ರಸ್ತಾಪ ಪದೇ ಪದೇ ಬರುತ್ತದೆ. ಒಮ್ಮೆಯಂತೂ ಈಚಿಪ್ತಿನ ದೊರೆಗಳು ಯಹೂದ್ಯರನ್ನು ಬಂಧನದಲ್ಲಿ ಇಟ್ಟಿದ್ದರೆಂಬ ಕಾರಣಕ್ಕೆ ದೇವನಿಗೆ ಕೋಪ ಬರುತ್ತದೆ. ಆತ ಮೋಸೆಸ್ ಎಂಬ ಅನುಯಾಯಿಯನ್ನು ಕರೆದು ಮಿಡತೆ ದಾಳಿಗೆ ಆದೇಶ ನೀಡುತ್ತಾನೆ. ಸರ್ವನಾಶ ಆಗಿ ಹೋಗಲಿ ಎಂದು. ಕುರಾನಿನಲ್ಲಿ ಎರಡೇ ಬಾರಿ ನಾವು ಮಿಡತೆಗಳ ಹೆಸರನ್ನು ನೋಡುತ್ತೇವೆ. ದುಷ್ಟ ಮನುಷ್ಯನೊಬ್ಬನ ಮೇಲೆ ಏನೆಲ್ಲ ಸಂಕಟಗಳ ಸುರಿಮಳೆ ಮಾಡಿದರೂ ಆತ ತನ್ನ ದುಷ್ಟಬುದ್ಧಿಯನ್ನು ಬಿಡುವುದಿಲ್ಲ ಎನ್ನುವಾಗ ಮಿಡತೆಗಳ ಸುರಿಮಳೆಯ ಪ್ರಸ್ತಾಪ ಬರುತ್ತದೆ.

ಸಂಸ್ಕೃತದಲ್ಲಿ ಮಿಡತೆಗೆ ‘ಶಲಭ’ ಅನ್ನುತ್ತಾರೆ. ಮೊಟ್ಟೆಗಳಿಂದ ಜನಿಸುವ ಜೀವಿಗಳನ್ನು ‘ಅಂಡಜ’ ಅನ್ನುವ ಹಾಗೆ, ತೇವ ಮತ್ತು ಉಷ್ಣ ಪರಿಸರದಿಂದ ಹೊಮ್ಮುವ ಸೊಳ್ಳೆ, ನೊಣ, ತಿಗಣೆ, ಮಿಡತೆಗಳನ್ನು ‘ಶ್ವೇದಜ’ ಎಂದು ನಮ್ಮ ಹಿಂದಿನವರು ವರ್ಗೀಕರಿಸಿದ್ದಾರೆ. ಅವುಗಳ ಕಾಟ ತಗ್ಗಿಸಲೆಂದು ಪ್ರಾರ್ಥನೆಯೂ ಅಥರ್ವಣವೇದದಲ್ಲಿದೆ (6.50.2). ‘ನಮ್ಮ ಆಹಾರಗಳನ್ನು ಧ್ವಂಸ ಮಾಡಲೆಂದು ಬರುವ ಎಲೈ ಮಿಡತೆ ಪತಂಗಗಳೇ, ದೂರ ಹೋಗಿ! ಅಶುದ್ಧ ನೈವೇದ್ಯವನ್ನು ದೇವರು ತಿರಸ್ಕರಿಸುವ ಹಾಗೆ ನೀವೂ ನಮ್ಮ ಆಹಾರವನ್ನು ತಿನ್ನದೆ, ಧ್ವಂಸ ಮಾಡದೇ ಹೊರಟು ಹೋಗಿ ಎಂಬ ಪ್ರಾರ್ಥನೆ ಅದರಲ್ಲಿದೆ.

ಶಲಭ ಎಂಬ ಪದವನ್ನು ನೆನಪಿನಲ್ಲಿ ಇಡುವುದು ಸುಲಭ. ಯೋಗಾಭ್ಯಾಸ ಮಾಡುವವರು ಶಲಭಾಸನ ಹಾಕಿದರೆ ತುಸುಮಟ್ಟಿಗೆ ಮಿಡತೆಯಂತೆಯೇ ಕಾಣುತ್ತಾರೆ. ಶಲಭಾಸನದಲ್ಲಿ ಹೊಟ್ಟೆಯ ಮೇಲೆ ಜಾಸ್ತಿ ಭಾರ ಬೀಳುತ್ತದೆ. ಮಿಡತೆ ದಾಳಿಯಲ್ಲೂ ಹೊಟ್ಟೆಗೇ ತಾಪತ್ರಯ ಆಗುತ್ತದೆ.

ಉದ್ದುದ್ದ ಹಿಂಗಾಲುಗಳ ಮಿಡತೆಗಳು ರೆಕ್ಕೆ ಬೀಸದೆಯೂ ಐದಾರು ಮೀಟರ್ ದೂರ ಚಿಮ್ಮುತ್ತವೆ. ಆಮೇಲೆ ರೆಕ್ಕೆ ಬೀಸುತ್ತ ಗಾಳಿ ಬೀಸಿದ ದಿಕ್ಕಿಗೆ ಅವು 20-30 ಕಿ.ಮೀ. ದೂರಕ್ಕೂ ಹಾರುತ್ತವೆ. ಆ ಪುಟ್ಟ ಕೀಟದ ಅಪಾರ ನೆಗೆತವನ್ನು ನೋಡಿ ಕನ್ನಡದ ಹಳ್ಳಿಯ ಜನರು ‘ಸೂರ್ಯನ ಕುದುರೆ’ ಎಂದು ಹೆಸರಿಟ್ಟು ಅದೆಂಥ ಸೃಜನಶೀಲತೆಯನ್ನು ಮೆರೆದಿದ್ದಾರೆ ಎಂದು ಹೇಳಿ ಡಾ. ಯು.ಆರ್. ಅನಂತಮೂರ್ತಿಯವರು ತಮ್ಮ ಕೃತಿಯೊಂದಕ್ಕೆ ಅದೇ ಹೆಸರನ್ನಿಟ್ಟಿದ್ದಾರೆ.

ಮುಂಗಾರಿನ ಈ ಸಮಯದಲ್ಲಿ ನಮ್ಮಲ್ಲಿ ಬಹುತೇಕ ಎಕ್ಕದ ಗಿಡಗಳ ಮೇಲೆ ಈ ಕುದುರೆಗಳು ಸಾಲಾಗಿ ಕೂತಿರುತ್ತವೆ. ಆದರೆ ನಾವು ದಕ್ಷಿಣ ಭಾರತದವರು ಸುರಕ್ಷಿತ. ಇಲ್ಲಿನ ಹಸುರು ಮಿಡತೆಗಳು ದಂಡು ಕಟ್ಟಿಕೊಂಡು ದಾಳಿಗೆ ಹೋಗುವುದಿಲ್ಲ. ಬರದೇಶಗಳ ದಂಡುಕೋರ ಮಿಡತೆಗಳೂ ಇತ್ತ ಬರುವುದಿಲ್ಲ.

ಅದು ಸರಿ, ಕಳೆದ 26 ವರ್ಷಗಳಲ್ಲಿ ಕಾಣದ ಮಿಡತೆ ಪ್ಲೇಗ್ ಈ ವರ್ಷ ಯಾಕೆ ಇಷ್ಟು ಉಗ್ರ?
ಏಕೆಂದರೆ ಕಳೆದ ಎರಡು ವರ್ಷಗಳಲ್ಲಿ ಅರಬ್ ಪ್ರಾಂತ್ಯಗಳಲ್ಲಿ ಕೆಲವೆಡೆ ಭಾರೀ ಚಂಡಮಾರುತ ಬೀಸಿ, ಮರುಭೂಮಿಯಲ್ಲಿ ಅಲ್ಲಲ್ಲಲ್ಲಿ ಓಯಸಿಸ್ ರೂಪದ ಕೆರೆಗಳು ಉಂಟಾಗಿದ್ದವು. ಅಲ್ಲಿ ನಾಲ್ಕಾರು ತಿಂಗಳು ತೇವಾಂಶ ಜಾಸ್ತಿ ಇತ್ತು. ಅಲ್ಲೆಲ್ಲ ಹುಟ್ಟಿಕೊಂಡ ಮಿಡತೆಗಳು ಚಂಡಮಾರುತದಂತೆ ಬೀಸಿ ಬರುತ್ತಿವೆ.

ಗಡಿ ದಾಟುತ್ತ ದಾಟುತ್ತ ಪಾಕಿಸ್ತಾನ ದಾಟಿ ರಾಜಸ್ತಾನ, ಗುಜರಾತ, ಮಧ್ಯಪ್ರದೇಶಗಳಲ್ಲಿ ಹಾವಳಿ ಎಬ್ಬಿಸಿವೆ. ಪಾಕಿಸ್ತಾನದಲ್ಲಿ ಮೂರು ತಿಂಗಳು ಹಿಂದೆ ರೈತರು ಭಾರೀ ನಷ್ಟ ಅನುಭವಿಸಿದ್ದರು. ನಮ್ಮ ರೈತರಿಗೆ ಹಾನಿ ಅಷ್ಟಾಗಿಲ್ಲ ಏಕೆಂದರೆ ಅವು ದಂಡೆತ್ತಿ ಬರುವಷ್ಟರಲ್ಲಿ ಇಲ್ಲಿ ಕಟಾವು ಮುಗಿದಿತ್ತು.

ಹಳ್ಳಿಗಳನ್ನು ಬಿಟ್ಟು ಅವು ಈಗ ನಗರಗಳಿಗೇ ದಾಳಿ ಇಡುತ್ತಿವೆ. ಏನು ಕಾರಣ? ಸೀರಿಯಸ್ ಜೋಕ್ ಏನೆಂದರೆ- ಅವು ಉತ್ತರ ಭಾರತದ ಹಳ್ಳಿಗಳ ದಾರಿದ್ರ್ಯದ ಕತೆಯನ್ನು ವರದಿ ಮಾಡಲೆಂದು ಅವು ನಗರಗಳಿಗೆ ಬರುತ್ತಿವೆ. ಅಲ್ಲಿನ ಹಳ್ಳಿಗಳಲ್ಲಿ ಎಲ್ಲೆಲ್ಲೂ ಹೊಲಗಳೇ ಹೊರತೂ ನೈಸರ್ಗಿಕ ಗಿಡಮರಗಳ ಸಾಂದ್ರತೆ ತೀರ ಕಡಿಮೆ. ಅರಣ್ಯಗಳಂತೂ ಇಲ್ಲವೇ ಇಲ್ಲ. ಪೈರು ಕಟಾವಾದ ಮೇಲೆ ನೀವು ಅಷ್ಟಿಷ್ಟು ಹಸುರನ್ನು ನೋಡಬೇಕೆಂದರೆ ನಗರದ ಉದ್ಯಾನಗಳಿಗೇ ಬರಬೇಕು. ಅವು ಬರುತ್ತಿವೆ.

ಈಗಾಗಲೇ ಜಯಪುರ, ಝಾಂಸಿಯಂಥ ನಗರಗಳು ಕಂಗಾಲಾಗಿವೆ. ತಮಾಷೆ ಏನೆಂದರೆ ಕೊರೊನಾ ಮಾದರಿಯ ಸರಕಾರಿ ನಿಯಂತ್ರಣ ಕ್ರಮಗಳೇ ಅಲ್ಲೂ ಜಾರಿಗೆ ಬಂದಿವೆ! ಶಂಖ- ಜಾಗಟೆ ಬಾರಿಸಿ ಡಾಂ ಡೂಮ್ ಮಾಡುತ್ತಿದ್ದಾರೆ. ಕೀಟನಾಶಕ ದ್ರವಗಳನ್ನು ತುಂಬಿಕೊಂಡ ಸಾವಿರಾರು ಟ್ಯಾಂಕರ್ಗಳು ಜಾಥಾ ಹೊರಟಿವೆ. (ವಲಸೆ ಕಾರ್ಮಿಕರನ್ನು ಸಾಲಾಗಿ ನಿಲ್ಲಿಸಿ ಅವರ ಮೈಗೆ ಬ್ಲೀಚಿಂಗ್ ದ್ರಾವಣವನ್ನು ಎರಚಿದ ಹಾಗೆ) ಮಿಡತೆಗಳು ಆಶ್ರಯಿಸಿದ ಮರಗಳ ಮೇಲೆ ಭರ್ಜರಿ ಸಿಂಚನ ಮಾಡಲಾಗುತ್ತಿದೆ. ಈಗಂತೂ ಡ್ರೋನ್‌ಗಳ ಮೂಲಕವೂ ಸಿಂಚನ ಮಾಡಲು ಸಿದ್ಧತೆ ನಡೆದಿದೆ.

ವಲಸೆ ಕಾರ್ಮಿಕರು ಪಾಪ, ಈ ಮಿಡತೆಗಳಂತೆ ಹಳ್ಳಿಗಳನ್ನು ಬಿಟ್ಟು ಹೊಸ ಕನಸನ್ನು ಹುಡುಕುತ್ತ ನಗರಗಳಿಗೆ ಬಂದಿದ್ದಾರೆ, ಅವರ ಅವಸ್ಥೆ ನೋಡಿ. ಇಲ್ಲಿರಲಾರೆ, ಅಲ್ಲಿಗೆ ಹೋಗಲಾರೆ ಎಂಬಂಥ ಪರಿಸ್ಥಿತಿ ಮಿಡತೆಗಳಿಗೂ ಬಂದಿದೆ. ಅಂತೂ ಸ್ಯಾನಿಟೈಸರ್ ಮತ್ತು ಕೀಟನಾಶಕ ವಿಷಗಳ ಉತ್ಪಾದನೆ ಮಾಡುವ ಕಂಪನಿಗಳಿಗೆ ಕೊರೊನಾ ಕಾಲದಲ್ಲೂ ಹಬ್ಬ, ಮಿಡತೆಕಾಲದಲ್ಲೂ ಹಬ್ಬ.

‘ಬರ ಎಂದರೆ ಎಲ್ಲರಿಗೂ ಇಷ್ಟ’ ಎಂಬ ಸಾಯಿನಾಥ್ ಗ್ರಂಥದ ಹೆಸರು ನೆನಪಿಗೆ ಬಂತೆ?
ಆಫ್ರಿಕದಲ್ಲಿ ಮಿಡತೆಗಳು ಹಸಿವೆಗೆ ಕಾರಣವೂ ಹೌದು, ಪರಿಹಾರವೂ ಹೌದು ಎಂದೆನಲ್ಲ? ಭಾರತದಲ್ಲೂ ಪರಿಸ್ಥಿತಿ ತುಸು ಅದೇನೇ ಇದೆ. ವ್ಯತ್ಯಾಸ ಏನೆಂದರೆ, ಹಳ್ಳಿಗಳಲ್ಲಿ ಹಸಿವೆ ಸಂಕಷ್ಟ ಹೆಚ್ಚುತ್ತದೆ. ನಗರಗಳಲ್ಲಿನ ದಲ್ಲಾಳಿಗಳ ಹಸಿವೆಗೆ ಪರಿಹಾರ ಸಿಗುತ್ತದೆ.

ಮಿಡತೆಗೂ ಕೊರೊನಾಕ್ಕೂ ಇರುವ ಕೊನೆಯ ಇನ್ನೊಂದು ಸಾಮ್ಯವನ್ನು ಇಲ್ಲಿ ಹೇಳಿಬಿಡಬೇಕು: ನೆರೆಯ ದೇಶಗಳಲ್ಲಿ ಅದು ಹಾವಳಿ ಎಬ್ಬಿಸುತ್ತಿದೆ ಎಂದು ನಾಲ್ಕು ತಿಂಗಳು ಮೊದಲೇ ಸೂಚನೆ ಸಿಕ್ಕಿತ್ತು. ಟಾಂ ಟಾಂ ಆಗಿತ್ತು. ಆಗಲೇ ಗಡಿಯನ್ನು ಭದ್ರ ಮಾಡುವಂತೆ ಸರಹದ್ದಿನಲ್ಲಿ ಸೂಕ್ತ ಕ್ರಮ ಕೈಗೊಂಡಿದ್ದಿದ್ದರೆ ಮಿಡತೆ ಹಾವಳಿ ಇಷ್ಟು ವ್ಯಾಪಕ ಆಗುತ್ತಿರಲಿಲ್ಲ.

ಮಿಡತೆ ದಾಳಿಯಿಂದ ಜರ್ಝರಿತಗೊಂಡ ಜೀವಲೋಕ ಈಗ ಇವರು ಎರಚುವ ವಿಷಧಾರೆಗೆ ತತ್ತರಿಸುತ್ತಿದೆ. ನಮ್ಮಲ್ಲಿರುವ ವಿಷಗಳು ಸಾಲದೆಂದು ಅವಸರದಲ್ಲಿ ಇಂಗ್ಲಂಡಿನಿಂದ ಘೋರ ವಿಷಗಳನ್ನು ತರಿಸುತ್ತಿದ್ದಾರಂತೆ. ಅವುಗಳ ಸಿಂಚನದಿಂದಾಗಿ ಜೇಡ, ಜೇನ್ನೊಣ, ಎರೆಹುಳ, ಇರುವೆ, ಕಪ್ಪೆ, ಚಿಟ್ಟೆ, ಓತಿಕ್ಯಾತ, ಗುಬ್ಬಚ್ಚಿ, ಗೀಜಗ, ಸೂರಕ್ಕಿ ಹೀಗೆ ಎಲ್ಲ ನೆಲಮೂಲದ ಜೀವಲೋಕದ ಮಾರಣ ಹೋಮ ಆಗುತ್ತಿದೆ.

(ಇಂಗ್ಲಂಡಿನ ಬದುಕಿನ ಅನುಕರಣೆಯ ಬಗ್ಗೆ ಗಾಂಧೀಜಿ ಏನು ಹೇಳಿದ್ದರೆಂಬುದೂ ನಮಗಿಲ್ಲಿ ನೆನಪಾಗಬೇಕು. ಅವರು ಅದನ್ನು ಹೇಳುವಾಗ ಇಡೀ ದೇಶದ ಜನಸಂಖ್ಯೆ 30 ಕೋಟಿ ಇತ್ತು. ಇಂದು ಸುಮಾರು 30 ಕೋಟಿ ಜನರಿಗೆ ಐಷಾರಾಮಿ ಜೀವನ ಕೈಗೆಟುಕಿದೆ. ಮಿಡತೆ ದಾಳಿಯ ಪರಿಣಾಮ ಇತರ ನೂರು ಕೋಟಿ ಜನರ ಮೇಲೆ ಕಾಣತೊಡಗಿದೆ.)

ಮೊನ್ನೆ ಮೇ 22ರಂದು ಜೀವಿವೈವಿಧ್ಯ ರಕ್ಷಣೆಯ ದಿನವಾಗಿತ್ತು; ಬರಲಿರುವ ಜೂನ್ 5ರ ವಿಶ್ವಪರಿಸರ ದಿನಕ್ಕೂ ಜೀವಿವೈವಿಧ್ಯ ರಕ್ಷಣೆಯೇ ಘೋಷವಾಕ್ಯವಾಗಿದೆ. ಕೋವಿಡ್‌ ಅನ್ನಿ, ಆಂಫನ್‌ ಅನ್ನಿ, ಮಿಡತೆ ಅನ್ನಿ, ಇಡೀ ದೇಶವೇ ವಿಷಸಿಂಚನದ ಭರಾಟೆಯಲ್ಲಿದೆ.

ಚಿಂತಿಸಬೇಕಿಲ್ಲ. ಜೂನ್ 5ರ ಸರಕಾರಿ ಜಾಹೀರಾತುಗಳಲ್ಲಿ ಜೀವಿವೈವಿಧ್ಯ ರಕ್ಷಣೆಯ ಘೋಷಣೆ ಅದ್ಧೂರಿಯಾಗಿ ನಡೆಯಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ

Published

on

ಸುದ್ದಿದಿನ,ದಾವಣಗೆರೆ:ಮಾರ್ಚ್ 18 ರಿಂದ ಪ್ರಾರಂಭವಾಗುವ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಹೆಚ್ಚಿಸಲು ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.

ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಮತ್ತು ಶೈಕ್ಷಣಿಕ ಕಾರ್ಯಾಗಾರದಲ್ಲಿ ಜಿಲ್ಲಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಮತ್ತು ಉಪ ಪ್ರಾಂಶುಪಾಲರನ್ನು ಉದ್ದೇಶಿಸಿ ಮಾತನಾಡಿದರು.

ಪ್ರಸ್ತುತ ಎಸ್.ಎಸ್.ಎಲ್.ಸಿ ಎರಡು ಪೂರ್ವಭಾವಿ ಪರೀಕ್ಷೆಗಳು ನಡೆದಿದ್ದು ಶೇ. 18 ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಶಾಲೆಗಳಿಗೆ ನೋಟಿಸ್ ನೀಡಿ ವಿವರಣೆಯನ್ನು ಪಡೆಯಬೇಕು, ಎಸ್.ಎಸ್.ಎಲ್.ಸಿ ಗೆ ಪ್ರವೇಶ ಪಡೆದು ಪರೀಕ್ಷೆಗೆ ಗೈರಾಗಿರುವ ಮಕ್ಕಳ ಬಗ್ಗೆ ಮಾಹಿತಿಯನ್ನು ಕಲೆಹಾಕಿ ಮನೆಮನೆ ಭೇಟಿ, ಅವರನ್ನು ಮತ್ತೇ ಶಾಲೆಗೆ ಕರೆತರಲು ಕ್ರಮವಹಿಸಬೇಕು ಎಂದು ತಿಳಿಸಿದರು.

ಡಿಡಿಪಿಐ ಕೊಟ್ರೇಶ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 21,863 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪ್ರವೇಶ ಪಡೆದಿದ್ದಾರೆ, ವಿವಿಧ ಕಾರಣಗಳಿಂದ 378 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿಲ್ಲ. ಅಂತಿಮವಾಗಿ 21,400 ವಿದ್ಯಾರ್ಥಿಗಳು ಪರೀಕ್ಷೆಗೆ ದಾಖಲಾಗಿದ್ದಾರೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಗೆ 20,129 ವಿದ್ಯಾರ್ಥಿಗಳು ಹಾಜರಾಗಿದ್ದು, 1,353 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು.

ಕಡಿಮೆ ಹಾಜರಾತಿ (75% ಕ್ಕಿಂತ ಕಡಿಮೆ) ಮತ್ತು ಪರೀಕ್ಷೆಯ ಬಗ್ಗೆ ಆಸಕ್ತಿ ಇಲ್ಲದಿರುವುದು ಗೈರುಹಾಜರಿಗೆ ಮುಖ್ಯ ಕಾರಣಗಳಾಗಿವೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಜಿಲ್ಲೆಯ ಒಟ್ಟು ಫಲಿತಾಂಶ 49% ಬಂದಿದೆ. ಎರಡನೇ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಫಲಿತಾಂಶ 68% ಕ್ಕೆ ಏರಿಕೆಯಾಗಿದೆ, ಆದರೆ 1,460 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ಗೈರುಹಾಜರಾದ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ, ಪೋಷಕರ ಮನವೊಲಿಸಿ ಅವರನ್ನು ಶಾಲೆಗೆ ಕರೆತರುವಂತೆ ಕ್ರಮವಹಿಸಲಾಗಿದೆ, ವಿದ್ಯಾರ್ಥಿಗಳ ಸಂದೇಹಗಳನ್ನು ಪರಿಹರಿಸುವುದು ಮತ್ತು ಪರೀಕ್ಷಾ ವಿಧಾನಗಳ ಬಗ್ಗೆ ತಿಳಿಸಿಕೊಡುವುದು.

ಮಂಡಳಿಯಿAದ ನೀಡಲಾದ 4 ಮಾದರಿ ಪ್ರಶ್ನೆ ಪತ್ರಿಕೆಗಳು ಮತ್ತು 2 ಪೂರ್ವಸಿದ್ಧತಾ ಪರೀಕ್ಷಾ ಪತ್ರಿಕೆಗಳು ಸೇರಿದಂತೆ ಒಟ್ಟು 6 ಪ್ರಶ್ನೆ ಪತ್ರಿಕೆಗಳನ್ನು ಪದೇ ಪದೇ ಬಿಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವುದು. ಅನುತ್ತೀರ್ಣರಾಗುವ ಸಾಧ್ಯತೆ ಇರುವ ಸುಮಾರು 1,400 ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಗಮನ ಹರಿಸಿ ಅವರು ತೇರ್ಗಡೆಯಾಗುವಂತೆ ನೋಡಿಕೊಳ್ಳಲು ಕ್ರಮವಹಿಸಲಾಗಿದೆ ಎಂದು ಸಭೆಗೆ ತಿಳಿಸಿದರು.

ಶಿಕ್ಷಕರು ಅತಿ ಮುಖ್ಯವಾಗಿ ಗೈರುಹಾಜರಾಗಿರೋ ಮಕ್ಕಳನ್ನ ಶಾಲೆಗೆ ಕರೆತರಬೇಕು, ಮನೆ ಮನೆ ಭೇಟಿ ಮಾಡಿ ಪಾಲಕ ಪೋಷಕರಿಗೆ ಮನವೊಲಿಸಿ, ಶಿಕ್ಷಣ ಇಲಾಖೆ ನೀಡಿರುವ ಬ್ಲೂಪ್ರಿಂಟ್ ಪ್ರಕಾರ ಮಕ್ಕಳನ್ನು ಸಿದ್ದಗೊಳಿಸಿ, ಪ್ರಶ್ನೆ ಪತ್ರಿಕೆಗಳನ್ನ ಪದೇ ಪದೇ ಬಿಡಿಸೋದರ ಮೂಲಕ ಮಕ್ಕಳಲ್ಲಿ ಒಂದು ಆತ್ಮವಿಶ್ವಾಸ ತುಂಬಬೇಕು , ಗೈರಾಗಿರುವ ವಿದ್ಯಾರ್ಥಿಗಳ ಸಂಖ್ಯೆ 1,400 ಇದೆ, ಆ ವಿದ್ಯಾರ್ಥಿಗಳು ಉತ್ತೀರ್ಣರಾದರೆ ಒಂದು ಉತ್ತಮ ಫಲಿತಾಂಶವನ್ನ ನಿರೀಕ್ಷೆ ಮಾಡಬಹುದು, ಮಕ್ಕಳಿಗೆ ಪಾಠದ ಜೊತೆಗೆ ಆಟಕ್ಕೂ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಸಿಇಒ ಗಿತ್ತೇ ಮಾಧವ ವಿಠಲ್ ರಾವ್, ಡಯಟ್ ಪ್ರಾಂಶುಪಾಲರಾದ ಗೀತಾ, ಜಿಲ್ಲೆಯ ಎಲ್ಲಾ ಕ್ಷೇತ್ರಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಫೆ.14 ರಂದು ಸಂತ ಸೇವಾಲಾಲ್‌ರವರ 287ನೇ ಜಯಂತಿ ಕಾರ್ಯಕ್ರಮ

Published

on

ಸುದ್ದಿದಿನ,ದಾವಣಗೆರೆ:ಸಂತ ಸೇವಾಲಾಲ್‌ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ.

ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತ, ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಾಹಣಾ ಪ್ರತಿಷ್ಠಾನ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಭಾಯ್‌ಗಡ್, ಸೂರಗೊಂಡನಕೊಪ್ಪ ಇವರ ಸಹಯೋಗದಲ್ಲಿ ಜರುಗಲಿರುವ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸುವರು.ಹೊನ್ನಾಳಿ ಕ್ಷೇತ್ರದ ಶಾಸಕರಾದ ಡಿ.ಜಿ.ಶಾಂತನಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಸಂತಸೇವಾಲಾಲ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಇವರು ವಲಸೆ ಮಕ್ಕಳ ವಸತಿ ಶಾಲೆಯ ಶಂಕುಸ್ಥಾಪನೆಯನ್ನು ಉದ್ಘಾಟಿಸುವರು.

ಕೇಂದ್ರ ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ವಿ.ಸೋಮಣ್ಣ ಘನ ಉಪಸ್ಥಿತರಾಗಿರುವರು.

ಮುಖ್ಯ ಅತಿಥಿಗಳಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಗೃಹಮಂತ್ರಿಗಳಾದ ಡಾ.ಜಿ.ಪರಮೇಶ್ವರ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ವಿರೋಧಪಕ್ಷದ ನಾಯಕರಾದ ಆರ್.ಅಶೋಕ, ಮತ್ತು ಛಲವಾದಿ ನಾರಾಯಣಸ್ವಾಮಿ, ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ವೆಂಕಟೇಶ್ ನಾಯ್ಕ.ಟಿ, ವಿಧಾನಸಭೆಯ ಉಪಸಭಾಪತಿ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯ ಅಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ, ಮಹಾರಾಷ್ಟ್ರ ಸರ್ಕಾರದ ಮಣ್ಣು ಮತ್ತು ಜಲ ಸಂರಕ್ಷಣಾ ಸಚಿವರಾದ ಸಂಜಯ್ ಡಿ.ರಾಥೋಡ್, ಮಹಾರಾಷ್ಟ್ರ ಸರ್ಕಾರದ ಪ್ರವಾಸೋದ್ಯಮ, ಲೋಕೋಪಯೋಗಿ, ಕೈಗಾರಿಕೆ ಉನ್ನತ ಹಾಗೂ ತಾಂತ್ರಿಕ ಶಿಕ್ಷಣ ಸಚಿವರಾದ ಇಂದ್ರನಿಲ್ ಮನೋಹರ್ ನಾಯ್ಕ್, ತೆಲಂಗಾಣ ರಾಜ್ಯದ ಮಹಬೂಬಬಾದ್ ಕ್ಷೇತ್ರದ ಸಂಸದರಾದ ಬಲರಾಮ ನಾಯ್ಕ, ಭಾಗವಹಿಸುವರು.

ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕರುಗಳಾದ ಕೆ.ಎಸ್.ಬಸವಂತಪ್ಪ, ಬಿ.ದೇವೇಂದ್ರಪ್ಪ, ಬಸವರಾಜು ವಿ.ಶಿವಗಂಗಾ, ಬಿ.ಪಿ ಹರೀಶ್, ಜೆ.ಡಿ.ಎಸ್ ಶಾಸಕಾಂಗ ಪಕ್ಷದ ಉಪನಾಯಕರು ಹಾಗೂ ಶಾಸಕರಾದ ಶಾರದಾ ಪೂರ್ಯಾನಾಯ್ಕ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಜಿ.ಹೆಚ್ ಮರಿಯೋಜಿರಾವ್, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷರಾದ ವಡ್ನಾಳ್ ಜಗದೀಶ್, ಬಯಲುಸೀಮೆ ಪ್ರದ್ರೇಶಾಭಿವೃದ್ದಿ ಮಂಡಳಿಯ ಹೆಚ್.ಬಿ.ಮಂಜಪ್ಪ, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎನ್. ಜಯದೇವನಾಯ್ಕ್, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ಎಲ್.ಭೋಜೇಗೌಡ, ಡಿ.ಎಸ್.ಅರುಣ್, ಕೆ.ಅಬ್ದುಲ್ ಜಬ್ಬಾರ್, ಡಿ.ಟಿ.ಶ್ರೀನಿವಾಸ್, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಾ.ಧನಂಜಯ್ ಸರ್ಜಿ, ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಕಾಂತಾನಾಯಕ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಾಮನೂರು.ಟಿ.ಬಸವರಾಜ್,ಲೋಕಸೇವಾ ಆಯೋಗದ ಸದಸ್ಯರಾದ ಭೋಜ್ಯಾನಾಯ್ಕ, ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರ ಕೃಷ್ಣಾ ಮೇಲ್ದಂಡೆ ಯೋಜನೆಯ ಅಧ್ಯಕ್ಷರಾದ ಬಾಬು ಹೊನ್ನನಾಯಕ್, ಬಂಜಾರ ಸಂಸ್ಕೃತಿ ಹಾಗೂ ಭಾಷಾ ಅಕಾಡೆಮಿಯ ಅಧ್ಯಕ್ಷರಾದ ಡಾ. ಮೋತಿಲಾಲ್ ಚವ್ಹಾಣ್, ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರಭು ಬಿ ಚವ್ಹಾಣ್, ಡಾ.ಅವಿನಾಶ್ ಜಾಧವ್, ನೇಮಿರಾಜ್ ನಾಯ್ಕ್, ಕೃಷ್ಣನಾಯ್ಕ, ಡಾ.ಚಂದ್ರ ಲಮಾಣಿ, ಭಾಯ್‌ಗಡ್ ಉನ್ನತಮಟ್ಟದ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಪಿ.ಟಿ ಪರಮೇಶ್ವರ್‌ನಾಯ್ಕ್.

ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್.ಡಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಡಾ.ರಾಕೇಶ್ ಕುಮಾರ್.ಕೆ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್.ಹೆಚ್ ತೆಕ್ಕಣ್ಣನವರ್, ಸಮಾಜ ಕಲ್ಯಾಣ ಇಲಾಖೆಯ ನೋಡೆಲ್ ಎಜೆನ್ಸಿ ಸಲಹೆಗಾರರಾದ ಡಾ.ಇ ವೆಂಕಯ್ಯ, ಕ.ತಾ.ಅ.ನಿ.ನಿ ವ್ಯವಸ್ಥಾಪಕ ನಿರ್ದೇಶಕರಾದ ಎನ್.ರಾಜು, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಪ್ರಧಾನ ಧರ್ಮದರ್ಶಿ ಬಿ. ಹೀರಾನಾಯ್ಕ, ಮಹಾಮಠ ನಿರ್ವಹಣಾ ಸಮಿತಿಯ ಅಧ್ಯಕ್ಷರಾದ ಹನುಮಂತನಾಯ್ಕ, ಸಮಿತಿಯ ಪ್ರಧಾನ ಕಾರ್ಯದರ್ಶಿ ಎನ್.ಅರುಣ್ ಕುಮಾರ್ ಭಾಗವಹಿಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending