Connect with us

ದಿನದ ಸುದ್ದಿ

ಮಿಡತೆ ದಾಳಿಯ ಪೂರ್ವಾಪರ : ಅದೂ ಯಾಕೊ ಕೊರೊನಾ ಥರಾ..!

Published

on

ರಾಜಸ್ಥಾನ ರಾಜ್ಯದ ರಾಜಧಾನಿ ಜೈಪುರದಲ್ಲಿ ಮಾವಿನ ಮರದಿಂದ ಮಿಡತೆಗಳ ಹಿಂಡುಗಳನ್ನು ತಪ್ಪಿಸಲು ನಿವಾಸಿಯೊಬ್ಬರು ಪ್ರಯತ್ನಿಸುತ್ತಿರುವುದು. [ವಿಶಾಲ್ ಭಟ್ನಾಗರ್ / ಎಎಫ್‌ಪಿ]
  • ನಾಗೇಶ್ ಹೆಗಡೆ

ತ್ತ ಪೂರ್ವಭಾರತದಲ್ಲಿ ಅಂಫನ್ ದಾಳಿ, ಇತ್ತ ದಿಲ್ಲಿಯ ಸುತ್ತ ಬಿಸಿಗಾಳಿಯ ದಾಳಿ, ಈಕಡೆ ಪಶ್ಚಿಮ ಭಾರತದಲ್ಲಿ ಮಿಡತೆ ದಾಳಿ. ಕೊರೊನಾ ಸಂದರ್ಭದಲ್ಲೇ ಬಂದೊದಗಿದ ಮಿಡತೆ ದಾಳಿ ಅದೆಷ್ಟು ರೀತಿಯಲ್ಲಿ ಕೊರೊನಾವನ್ನೇ ಹೋಲುತ್ತಿದೆ! ಯೋಗಾಸನದಲ್ಲಿ ಮಿಡತೆಯನ್ನು ಹೋಲುವ ‘ಶಲಭಾಸನ’ವೂ ಅದೇನನ್ನೋ ಸಂಕೇತಿಸುತ್ತಿದೆಯಲ್ಲ? ಮಿಡತೆ () ದಾಳಿ ಹೇಗಿರುತ್ತದೆ ಎಂಬುದನ್ನು ಅಕ್ಷರಗಳಲ್ಲಿ ಹಿಡಿಯೋಣ ಬನ್ನಿ.

ಮೋಡದ ವಿಶಾಲ ಚಾಪೆಯೊಂದು ಆಕಾಶದಲ್ಲಿ ತೇಲಿ ಬಂದಂತೆ ಕಾಣುತ್ತದೆ. ಅದೆಷ್ಟೊ ಕೋಟಿ ಮಿಡತೆಗಳು ಗಾಳಿಯಲ್ಲಿ ತೇಲಿ ಬರುವಾಗ ನೆಲಕ್ಕೆ ಕತ್ತಲು ಕವಿಯುತ್ತದೆ. ಹಾರಿ ಸುಸ್ತಾದ ಮರಿಮಿಡತೆ, ಮುದಿಮಿಡತೆಗಳು ನೆಲಕ್ಕಿಳಿಯುವಾಗ ಜಡಿಮಳೆ ಸುರಿದಂತಾಗುತ್ತದೆ.

ಅವು ಪೈರು, ಪೊದೆ, ಗಿಡಮರಗಳ ಮೇಲೆ ಕೂರಲು ತೊಡಗಿದರೆ ಹಸುರೆಲ್ಲ ಮುಚ್ಚಿಹೋಗಿ ಇಡೀ ಬೆಟ್ಟ ಕಂದುಬಣ್ಣಕ್ಕೆ ತಿರುಗುತ್ತದೆ. ಮಿಡತೆಗಳ ಭಾರಕ್ಕೆ ಗಿಡಗಳು ನೆಲಕ್ಕೆ ಬಾಗುತ್ತವೆ. ದೊಡ್ಡ ಮರಗಳ ಕೊಂಬೆಗಳೂ ಮುರಿದು ಬೀಳುತ್ತವೆ. ಅಷ್ಟೇಕೆ ಸಡಿಲ ಬೇರುಗಳ ಇಡೀ ಮರವೇ ನೆಲಕ್ಕೊರಗುತ್ತದೆ. ಬಿರುಗಾಳಿ ಹೆಪ್ಪುಗಟ್ಟಿದಂತೆ ಕಾಣುತ್ತದೆ.

ನೋಡನೋಡುತ್ತ ಗಿಡಗಳ ಮೇಲೆ ಕೂತು ಅವು ಮೂತಿಯನ್ನು ಒತ್ತಿ ಹಸುರನ್ನೂ ಕೆರೆಯತೊಡಗಿದರೆ ಮತ್ತೆ ಜಡಿಮಳೆಯ ಜರಜರ ಸದ್ದೇ ಬರುತ್ತಿರುತ್ತದೆ. ಎಲೆ, ಹೂವು, ಕಾಯಿ ಕೊನೆಗೆ ಹಸುರು ತೊಗಟೆಯನ್ನೂ ಮುಕ್ಕಿ ಅವು ಮೇಲಕ್ಕೆ ನೆಗೆದರೆ ನೆಲದ ಚಿತ್ರಣ ಬದಲಾಗುತ್ತದೆ. ಪೈರು-ಪೊದೆ-ಗಿಡ-ಮರಗಳೆಲ್ಲ ಒಣ ಪೊರಕೆಗಳಾಗುತ್ತವೆ. ಹಸುರನ್ನು ಆಧರಿಸಿದ ಇತರ ಜೀವಿಗಳ ಪರಿಸ್ಥಿತಿಯನ್ನು ಕೇಳುವುದೇ ಬೇಡ.
ಮಿಡತೆ ದಾಳಿಯ ಭಯಾನಕತೆ ಹೇಗಿರುತ್ತದೆ ಎಂಬುದು ಮಹಾತ್ಮಾ ಗಾಂಧಿಯವರಿಗೂ ಗೊತ್ತಿತ್ತು: ‘”ಭಾರತದ 30 ಕೋಟಿ ಪ್ರಜೆಗಳು ಬ್ರಿಟಿಷರ ಹಾಗೆ ಐಷಾರಾಮಿ ಜೀವನವನ್ನು ಬಯಸಿದರೆ ಇಡೀ ಪ್ರಪಂಚವೇ ಮಿಡತೆ ದಾಳಿಗೆ ತುತ್ತಾದಂತೆ ಬೋಳು ಬಯಲಾದೀತು” ಎಂದು ಅವರು ಎಚ್ಚರಿಸಿದ್ದರು.

ಮಿಡತೆಗಳ ಈ ದುರ್ದಾಳಿಯ ವಿವರಗಳು ವೇದದಲ್ಲೂ ಇವೆ, ಬೈಬಲ್ಲಿನಲ್ಲೂ ಇವೆ, ಕುರಾನ್ನಲ್ಲೂ ಇವೆ. ಅದನ್ನು ಆಮೇಲೆ ನೋಡೋಣ. ಈಗ ವಿಜ್ಞಾನಿಗಳು ಕಂಡ ಕೆಲವು ಸ್ವಾರಸ್ಯ ಇಲ್ಲಿದೆ:

ಸಾಮಾನ್ಯ ದಿನಗಳಲ್ಲಿ ಮರುಭೂಮಿಯ ಕುರುಚಲು ಪೊದೆಗಳಲ್ಲಿ ಅಲ್ಲೊಂದು ಇಲ್ಲೊಂದು ಮಿಡತೆ ತನ್ನ ಪಾಡಿಗೆ ತಾನಿರುತ್ತದೆ. ಆದರೆ ಒಣಹವೆ, ಸೆಕೆದಿನಗಳು ಹೆಚ್ಚಾದ ಹಾಗೆ, ತಿನ್ನಲು ಏನೂ ಇಲ್ಲದ ಪರಿಸ್ಥಿತಿ ಬಂತೆಂದರೆ ನೋಡಿ. ಬದುಕುಳಿಯುವ ಒಂದು ವಿಲಕ್ಷಣ ವಿಕಾಸ ಸೂತ್ರ ಆಗ ಜಾರಿಗೆ ಬರುತ್ತದೆ.

ಬದುಕಿಗೆ ಸಂಕಷ್ಟ ಬಂದಾಗ ಒಂಟೊಂಟಿ ಮಿಡತೆಗಳ ಮಿದುಳಿನಲ್ಲಿ ಸೆರೊಟೊನಿನ್ ಎಂಬ ರಸ ಉಕ್ಕುತ್ತದೆ. ಅದುವರೆಗೆ ಒಂಟಿಯಾಗಿ ಬದುಕುತ್ತಿದ್ದ ನೂರಾರು ಮಿಡತೆಗಳು ಗುಂಪಾಗಿ ಸೇರತೊಡಗುತ್ತವೆ. ಏನೋ ಸಿಗ್ನಲ್ ಸಿಕ್ಕಂತೆ ಒಟ್ಟಿಗೆ ನೆಗೆಯುತ್ತವೆ.

ಆಗಸ್ಟ್ 15ರ ಬೆಳಿಗ್ಗೆ ಎಲ್ಲ ಮನೆಗಳ ಒಂಟೊಂಟಿ ಮಕ್ಕಳೂ ಶಾಲೆಗೆ ಜಮಾಯಿಸಿ ಜನಗಣ ಮನ ಹಾಡುತ್ತ ಪ್ರಭಾತಫೇರಿಗೆ ಹೊರಡುವ ಹಾಗೆ.
ಅಥವಾ ಯಾರೋ ಕಿಂದರಜೋಗಿಯೊಬ್ಬ ತುತ್ತೂರಿ ಊದಿ ಎಲ್ಲ ಮಿಡತೆಗಳನ್ನೂ ಎಬ್ಬಿಸಿ ಹೊರಡಿಸಿದ ಹಾಗೆ.

(ಗೆದ್ದಲುಗಳಲ್ಲೂ ಇಂಥ ವೈಚಿತ್ರ್ಯ ಸಂಭವಿಸುತ್ತದೆ. ಚುನಾವಣೆಯಲ್ಲಿ ಟಿಕೆಟ್ ಸಿಗದ ನಾಯಕನ ಹಾಗೆ ಒಂಟಿ ಗೆದ್ದಲುಗಳು ಮುಖಮುಚ್ಚಿಕೊಂಡು ಅಲ್ಲಿ ಇಲ್ಲಿ ಗೊತ್ತುಗುರಿ ಇಲ್ಲದೆ ಅಂಡಲೆಯುತ್ತವೆ; ಇಲ್ಲವೆ ಮೂಲೆ ಹಿಡಿದು ಕೂತಿರುತ್ತವೆ. ಅದೇನು ಹೈಕಮಾಂಡ್ ನಿರ್ದೇಶನ ಬಂದರೆ ತಗಾ, ಸಖತ್ ಸಂಘಟನೆಯಾಗಿ, ಚಕಚಕನೆ ಹುತ್ತ ಕಟ್ಟುವುದೇನು, ಆಹಾರಕ್ಕೆ ಧಾವಿಸುವುದೇನು, ರಾಜರಾಣಿಯರಿಗೆ ಪಟ್ಟ ಕಟ್ಟುವುದೇನು, ಮೊಟ್ಟೆ ಮರಿಗಳ ಪೋಷಣೆ ಮಾಡುವುದೇನು…)

ಮಿಡತೆಗಳು ದಾಳಿ ಮಾಡಿದಲ್ಲಿ ಬರಗಾಲ ಬರುತ್ತದೊ ಅಥವಾ ಬರಗಾಲ ಬರುವಂಥ ಸ್ಥಿತಿಗಾಗಿ ಅವು ಕಾದು ಕೂತಿರುತ್ತವೊ -ಅಂತೂ ಆಫ್ರಿಕ, ಮೊಂಗೋಲಿಯಾ, ಆಸ್ಟ್ರೇಲಿಯಾ ಮತ್ತು ಮಧ್ಯಪ್ರಾಚ್ಯಗಳ ಬರಗೆಟ್ಟ ಭೂಮಿಗಳ ಅಂಚಿನ ಹೊಲಗಳಿಗೆ ಮಿಡತೆದಾಳಿ ಆಗಾಗ ಆಗುತ್ತಿರುತ್ತದೆ. ಇರಾನ್, ಇರಾಕ್ ಅಫ್ಘಾನಿಸ್ತಾನ್, ಕಿರ್ಗಿಸ್ತಾನ, ಪಾಕಿಸ್ತಾನ ದಾಟಿ ಅವು ನಮ್ಮಲ್ಲೂ ರಾಜಸ್ತಾನ್, ಗುಜರಾತಿನ ಕಚ್ಛದ ಮರುಭೂಮಿಗಳಲ್ಲಿ ಚಿಕ್ಕಪುಟ್ಟ ತುಕಡಿ ಕಟ್ಟಿಕೊಂಡು ಪ್ರತಿವರ್ಷ ಅಲ್ಲಿಷ್ಟು ಇಲ್ಲಿಷ್ಟು ಹಾವಳಿ ಎಬ್ಬಿಸುತ್ತವೆ. ಎಲ್ಲೋ ಕೆಲವು ದಶಕಗಳಿಗೊಮ್ಮೆ ಅವು ಪ್ಲೇಗ್, ಸಿಡುಬು, ಕೊರೊನಾ ಥರಾ ವ್ಯಾಪಕ ದಾಳಿಗೆ ಹೊರಡುತ್ತವೆ.

ಆಫ್ರಿಕದಲ್ಲಿ ಇದರ ಹಾವಳಿ ತುಸು ಪದೇ ಪದೇ ಕಂಡು ಬರುತ್ತಿರುತ್ತದೆ. ನೈಜೀರಿಯಾದ ಸಾಹಿತಿ ಚಿನುವಾ ಅಚಿಬೆ ಬರೆದ “ಥಿಂಗ್ಸ್ ಫಾಲ್ ಅಪಾರ್ಟ್’ ಕಾದಂಬರಿಯಲ್ಲಿ ಇದರ ಪ್ರಸ್ತಾಪ ಬರುತ್ತದೆ. ಐರೋಪ್ಯ ಕ್ರಿಶ್ಚಿಯನ್ ಮಿಶನರಿಗಳು ಆಫ್ರಿಕದ ಹಳ್ಳಿಗಳನ್ನು ಹೇಗೆ ಆಕ್ರಮಿಸಿದರು ಎಂಬುದನ್ನು ವರ್ಣಿಸಲು ಆತ ಈ ಕೀಟಗಳ ರೂಪಕವನ್ನು ಬಳಸಿಕೊಳ್ಳುತ್ತಾನೆ. ಮಿಡತೆಗಳ ಸೈನ್ಯ ಬಂತೆಂದರೆ ಹಳ್ಳಿಯ ಪ್ರತಿ ಗಿಡ, ಪೊದೆ, ಹುಲ್ಲೆಸಳ ಮೇಲೂ ಅವು ಕೂರುತ್ತವೆ. ಅವನ್ನು ಹೇಗೆ ಎದುರಿಸಬೇಕು ಎಂಬುದು ಹಳ್ಳಿಯ ಮುಗ್ಧರಿಗೆ ಗೊತ್ತಾಗುವುದಿಲ್ಲ. ಎದುರಿಸಬೇಕೆ ಬೇಡವೆ ಎಂಬುದೂ ಅವರಿಗೆ ಸ್ಪಷ್ಟವಿರುವುದಿಲ್ಲ. ಏಕೆಂದರೆ ಅವು ಹಸಿವೆಗೆ ಕಾರಣವೂ ಹೌದು, ಹಸಿವೆಗೆ ಪರಿಹಾರವೂ ಹೌದು (ಏಕೆಂದರೆ ಅಲ್ಲಿಯ ಜನರು ಮಿಡತೆಗಳನ್ನು ಹುರಿದು ತಿನ್ನುತ್ತಾರೆ.).

ಬೈಬಲ್ಲಿನಲ್ಲಿ ಮಿಡತೆದಾಳಿಯ ಪ್ರಸ್ತಾಪ ಪದೇ ಪದೇ ಬರುತ್ತದೆ. ಒಮ್ಮೆಯಂತೂ ಈಚಿಪ್ತಿನ ದೊರೆಗಳು ಯಹೂದ್ಯರನ್ನು ಬಂಧನದಲ್ಲಿ ಇಟ್ಟಿದ್ದರೆಂಬ ಕಾರಣಕ್ಕೆ ದೇವನಿಗೆ ಕೋಪ ಬರುತ್ತದೆ. ಆತ ಮೋಸೆಸ್ ಎಂಬ ಅನುಯಾಯಿಯನ್ನು ಕರೆದು ಮಿಡತೆ ದಾಳಿಗೆ ಆದೇಶ ನೀಡುತ್ತಾನೆ. ಸರ್ವನಾಶ ಆಗಿ ಹೋಗಲಿ ಎಂದು. ಕುರಾನಿನಲ್ಲಿ ಎರಡೇ ಬಾರಿ ನಾವು ಮಿಡತೆಗಳ ಹೆಸರನ್ನು ನೋಡುತ್ತೇವೆ. ದುಷ್ಟ ಮನುಷ್ಯನೊಬ್ಬನ ಮೇಲೆ ಏನೆಲ್ಲ ಸಂಕಟಗಳ ಸುರಿಮಳೆ ಮಾಡಿದರೂ ಆತ ತನ್ನ ದುಷ್ಟಬುದ್ಧಿಯನ್ನು ಬಿಡುವುದಿಲ್ಲ ಎನ್ನುವಾಗ ಮಿಡತೆಗಳ ಸುರಿಮಳೆಯ ಪ್ರಸ್ತಾಪ ಬರುತ್ತದೆ.

ಸಂಸ್ಕೃತದಲ್ಲಿ ಮಿಡತೆಗೆ ‘ಶಲಭ’ ಅನ್ನುತ್ತಾರೆ. ಮೊಟ್ಟೆಗಳಿಂದ ಜನಿಸುವ ಜೀವಿಗಳನ್ನು ‘ಅಂಡಜ’ ಅನ್ನುವ ಹಾಗೆ, ತೇವ ಮತ್ತು ಉಷ್ಣ ಪರಿಸರದಿಂದ ಹೊಮ್ಮುವ ಸೊಳ್ಳೆ, ನೊಣ, ತಿಗಣೆ, ಮಿಡತೆಗಳನ್ನು ‘ಶ್ವೇದಜ’ ಎಂದು ನಮ್ಮ ಹಿಂದಿನವರು ವರ್ಗೀಕರಿಸಿದ್ದಾರೆ. ಅವುಗಳ ಕಾಟ ತಗ್ಗಿಸಲೆಂದು ಪ್ರಾರ್ಥನೆಯೂ ಅಥರ್ವಣವೇದದಲ್ಲಿದೆ (6.50.2). ‘ನಮ್ಮ ಆಹಾರಗಳನ್ನು ಧ್ವಂಸ ಮಾಡಲೆಂದು ಬರುವ ಎಲೈ ಮಿಡತೆ ಪತಂಗಗಳೇ, ದೂರ ಹೋಗಿ! ಅಶುದ್ಧ ನೈವೇದ್ಯವನ್ನು ದೇವರು ತಿರಸ್ಕರಿಸುವ ಹಾಗೆ ನೀವೂ ನಮ್ಮ ಆಹಾರವನ್ನು ತಿನ್ನದೆ, ಧ್ವಂಸ ಮಾಡದೇ ಹೊರಟು ಹೋಗಿ ಎಂಬ ಪ್ರಾರ್ಥನೆ ಅದರಲ್ಲಿದೆ.

ಶಲಭ ಎಂಬ ಪದವನ್ನು ನೆನಪಿನಲ್ಲಿ ಇಡುವುದು ಸುಲಭ. ಯೋಗಾಭ್ಯಾಸ ಮಾಡುವವರು ಶಲಭಾಸನ ಹಾಕಿದರೆ ತುಸುಮಟ್ಟಿಗೆ ಮಿಡತೆಯಂತೆಯೇ ಕಾಣುತ್ತಾರೆ. ಶಲಭಾಸನದಲ್ಲಿ ಹೊಟ್ಟೆಯ ಮೇಲೆ ಜಾಸ್ತಿ ಭಾರ ಬೀಳುತ್ತದೆ. ಮಿಡತೆ ದಾಳಿಯಲ್ಲೂ ಹೊಟ್ಟೆಗೇ ತಾಪತ್ರಯ ಆಗುತ್ತದೆ.

ಉದ್ದುದ್ದ ಹಿಂಗಾಲುಗಳ ಮಿಡತೆಗಳು ರೆಕ್ಕೆ ಬೀಸದೆಯೂ ಐದಾರು ಮೀಟರ್ ದೂರ ಚಿಮ್ಮುತ್ತವೆ. ಆಮೇಲೆ ರೆಕ್ಕೆ ಬೀಸುತ್ತ ಗಾಳಿ ಬೀಸಿದ ದಿಕ್ಕಿಗೆ ಅವು 20-30 ಕಿ.ಮೀ. ದೂರಕ್ಕೂ ಹಾರುತ್ತವೆ. ಆ ಪುಟ್ಟ ಕೀಟದ ಅಪಾರ ನೆಗೆತವನ್ನು ನೋಡಿ ಕನ್ನಡದ ಹಳ್ಳಿಯ ಜನರು ‘ಸೂರ್ಯನ ಕುದುರೆ’ ಎಂದು ಹೆಸರಿಟ್ಟು ಅದೆಂಥ ಸೃಜನಶೀಲತೆಯನ್ನು ಮೆರೆದಿದ್ದಾರೆ ಎಂದು ಹೇಳಿ ಡಾ. ಯು.ಆರ್. ಅನಂತಮೂರ್ತಿಯವರು ತಮ್ಮ ಕೃತಿಯೊಂದಕ್ಕೆ ಅದೇ ಹೆಸರನ್ನಿಟ್ಟಿದ್ದಾರೆ.

ಮುಂಗಾರಿನ ಈ ಸಮಯದಲ್ಲಿ ನಮ್ಮಲ್ಲಿ ಬಹುತೇಕ ಎಕ್ಕದ ಗಿಡಗಳ ಮೇಲೆ ಈ ಕುದುರೆಗಳು ಸಾಲಾಗಿ ಕೂತಿರುತ್ತವೆ. ಆದರೆ ನಾವು ದಕ್ಷಿಣ ಭಾರತದವರು ಸುರಕ್ಷಿತ. ಇಲ್ಲಿನ ಹಸುರು ಮಿಡತೆಗಳು ದಂಡು ಕಟ್ಟಿಕೊಂಡು ದಾಳಿಗೆ ಹೋಗುವುದಿಲ್ಲ. ಬರದೇಶಗಳ ದಂಡುಕೋರ ಮಿಡತೆಗಳೂ ಇತ್ತ ಬರುವುದಿಲ್ಲ.

ಅದು ಸರಿ, ಕಳೆದ 26 ವರ್ಷಗಳಲ್ಲಿ ಕಾಣದ ಮಿಡತೆ ಪ್ಲೇಗ್ ಈ ವರ್ಷ ಯಾಕೆ ಇಷ್ಟು ಉಗ್ರ?
ಏಕೆಂದರೆ ಕಳೆದ ಎರಡು ವರ್ಷಗಳಲ್ಲಿ ಅರಬ್ ಪ್ರಾಂತ್ಯಗಳಲ್ಲಿ ಕೆಲವೆಡೆ ಭಾರೀ ಚಂಡಮಾರುತ ಬೀಸಿ, ಮರುಭೂಮಿಯಲ್ಲಿ ಅಲ್ಲಲ್ಲಲ್ಲಿ ಓಯಸಿಸ್ ರೂಪದ ಕೆರೆಗಳು ಉಂಟಾಗಿದ್ದವು. ಅಲ್ಲಿ ನಾಲ್ಕಾರು ತಿಂಗಳು ತೇವಾಂಶ ಜಾಸ್ತಿ ಇತ್ತು. ಅಲ್ಲೆಲ್ಲ ಹುಟ್ಟಿಕೊಂಡ ಮಿಡತೆಗಳು ಚಂಡಮಾರುತದಂತೆ ಬೀಸಿ ಬರುತ್ತಿವೆ.

ಗಡಿ ದಾಟುತ್ತ ದಾಟುತ್ತ ಪಾಕಿಸ್ತಾನ ದಾಟಿ ರಾಜಸ್ತಾನ, ಗುಜರಾತ, ಮಧ್ಯಪ್ರದೇಶಗಳಲ್ಲಿ ಹಾವಳಿ ಎಬ್ಬಿಸಿವೆ. ಪಾಕಿಸ್ತಾನದಲ್ಲಿ ಮೂರು ತಿಂಗಳು ಹಿಂದೆ ರೈತರು ಭಾರೀ ನಷ್ಟ ಅನುಭವಿಸಿದ್ದರು. ನಮ್ಮ ರೈತರಿಗೆ ಹಾನಿ ಅಷ್ಟಾಗಿಲ್ಲ ಏಕೆಂದರೆ ಅವು ದಂಡೆತ್ತಿ ಬರುವಷ್ಟರಲ್ಲಿ ಇಲ್ಲಿ ಕಟಾವು ಮುಗಿದಿತ್ತು.

ಹಳ್ಳಿಗಳನ್ನು ಬಿಟ್ಟು ಅವು ಈಗ ನಗರಗಳಿಗೇ ದಾಳಿ ಇಡುತ್ತಿವೆ. ಏನು ಕಾರಣ? ಸೀರಿಯಸ್ ಜೋಕ್ ಏನೆಂದರೆ- ಅವು ಉತ್ತರ ಭಾರತದ ಹಳ್ಳಿಗಳ ದಾರಿದ್ರ್ಯದ ಕತೆಯನ್ನು ವರದಿ ಮಾಡಲೆಂದು ಅವು ನಗರಗಳಿಗೆ ಬರುತ್ತಿವೆ. ಅಲ್ಲಿನ ಹಳ್ಳಿಗಳಲ್ಲಿ ಎಲ್ಲೆಲ್ಲೂ ಹೊಲಗಳೇ ಹೊರತೂ ನೈಸರ್ಗಿಕ ಗಿಡಮರಗಳ ಸಾಂದ್ರತೆ ತೀರ ಕಡಿಮೆ. ಅರಣ್ಯಗಳಂತೂ ಇಲ್ಲವೇ ಇಲ್ಲ. ಪೈರು ಕಟಾವಾದ ಮೇಲೆ ನೀವು ಅಷ್ಟಿಷ್ಟು ಹಸುರನ್ನು ನೋಡಬೇಕೆಂದರೆ ನಗರದ ಉದ್ಯಾನಗಳಿಗೇ ಬರಬೇಕು. ಅವು ಬರುತ್ತಿವೆ.

ಈಗಾಗಲೇ ಜಯಪುರ, ಝಾಂಸಿಯಂಥ ನಗರಗಳು ಕಂಗಾಲಾಗಿವೆ. ತಮಾಷೆ ಏನೆಂದರೆ ಕೊರೊನಾ ಮಾದರಿಯ ಸರಕಾರಿ ನಿಯಂತ್ರಣ ಕ್ರಮಗಳೇ ಅಲ್ಲೂ ಜಾರಿಗೆ ಬಂದಿವೆ! ಶಂಖ- ಜಾಗಟೆ ಬಾರಿಸಿ ಡಾಂ ಡೂಮ್ ಮಾಡುತ್ತಿದ್ದಾರೆ. ಕೀಟನಾಶಕ ದ್ರವಗಳನ್ನು ತುಂಬಿಕೊಂಡ ಸಾವಿರಾರು ಟ್ಯಾಂಕರ್ಗಳು ಜಾಥಾ ಹೊರಟಿವೆ. (ವಲಸೆ ಕಾರ್ಮಿಕರನ್ನು ಸಾಲಾಗಿ ನಿಲ್ಲಿಸಿ ಅವರ ಮೈಗೆ ಬ್ಲೀಚಿಂಗ್ ದ್ರಾವಣವನ್ನು ಎರಚಿದ ಹಾಗೆ) ಮಿಡತೆಗಳು ಆಶ್ರಯಿಸಿದ ಮರಗಳ ಮೇಲೆ ಭರ್ಜರಿ ಸಿಂಚನ ಮಾಡಲಾಗುತ್ತಿದೆ. ಈಗಂತೂ ಡ್ರೋನ್‌ಗಳ ಮೂಲಕವೂ ಸಿಂಚನ ಮಾಡಲು ಸಿದ್ಧತೆ ನಡೆದಿದೆ.

ವಲಸೆ ಕಾರ್ಮಿಕರು ಪಾಪ, ಈ ಮಿಡತೆಗಳಂತೆ ಹಳ್ಳಿಗಳನ್ನು ಬಿಟ್ಟು ಹೊಸ ಕನಸನ್ನು ಹುಡುಕುತ್ತ ನಗರಗಳಿಗೆ ಬಂದಿದ್ದಾರೆ, ಅವರ ಅವಸ್ಥೆ ನೋಡಿ. ಇಲ್ಲಿರಲಾರೆ, ಅಲ್ಲಿಗೆ ಹೋಗಲಾರೆ ಎಂಬಂಥ ಪರಿಸ್ಥಿತಿ ಮಿಡತೆಗಳಿಗೂ ಬಂದಿದೆ. ಅಂತೂ ಸ್ಯಾನಿಟೈಸರ್ ಮತ್ತು ಕೀಟನಾಶಕ ವಿಷಗಳ ಉತ್ಪಾದನೆ ಮಾಡುವ ಕಂಪನಿಗಳಿಗೆ ಕೊರೊನಾ ಕಾಲದಲ್ಲೂ ಹಬ್ಬ, ಮಿಡತೆಕಾಲದಲ್ಲೂ ಹಬ್ಬ.

‘ಬರ ಎಂದರೆ ಎಲ್ಲರಿಗೂ ಇಷ್ಟ’ ಎಂಬ ಸಾಯಿನಾಥ್ ಗ್ರಂಥದ ಹೆಸರು ನೆನಪಿಗೆ ಬಂತೆ?
ಆಫ್ರಿಕದಲ್ಲಿ ಮಿಡತೆಗಳು ಹಸಿವೆಗೆ ಕಾರಣವೂ ಹೌದು, ಪರಿಹಾರವೂ ಹೌದು ಎಂದೆನಲ್ಲ? ಭಾರತದಲ್ಲೂ ಪರಿಸ್ಥಿತಿ ತುಸು ಅದೇನೇ ಇದೆ. ವ್ಯತ್ಯಾಸ ಏನೆಂದರೆ, ಹಳ್ಳಿಗಳಲ್ಲಿ ಹಸಿವೆ ಸಂಕಷ್ಟ ಹೆಚ್ಚುತ್ತದೆ. ನಗರಗಳಲ್ಲಿನ ದಲ್ಲಾಳಿಗಳ ಹಸಿವೆಗೆ ಪರಿಹಾರ ಸಿಗುತ್ತದೆ.

ಮಿಡತೆಗೂ ಕೊರೊನಾಕ್ಕೂ ಇರುವ ಕೊನೆಯ ಇನ್ನೊಂದು ಸಾಮ್ಯವನ್ನು ಇಲ್ಲಿ ಹೇಳಿಬಿಡಬೇಕು: ನೆರೆಯ ದೇಶಗಳಲ್ಲಿ ಅದು ಹಾವಳಿ ಎಬ್ಬಿಸುತ್ತಿದೆ ಎಂದು ನಾಲ್ಕು ತಿಂಗಳು ಮೊದಲೇ ಸೂಚನೆ ಸಿಕ್ಕಿತ್ತು. ಟಾಂ ಟಾಂ ಆಗಿತ್ತು. ಆಗಲೇ ಗಡಿಯನ್ನು ಭದ್ರ ಮಾಡುವಂತೆ ಸರಹದ್ದಿನಲ್ಲಿ ಸೂಕ್ತ ಕ್ರಮ ಕೈಗೊಂಡಿದ್ದಿದ್ದರೆ ಮಿಡತೆ ಹಾವಳಿ ಇಷ್ಟು ವ್ಯಾಪಕ ಆಗುತ್ತಿರಲಿಲ್ಲ.

ಮಿಡತೆ ದಾಳಿಯಿಂದ ಜರ್ಝರಿತಗೊಂಡ ಜೀವಲೋಕ ಈಗ ಇವರು ಎರಚುವ ವಿಷಧಾರೆಗೆ ತತ್ತರಿಸುತ್ತಿದೆ. ನಮ್ಮಲ್ಲಿರುವ ವಿಷಗಳು ಸಾಲದೆಂದು ಅವಸರದಲ್ಲಿ ಇಂಗ್ಲಂಡಿನಿಂದ ಘೋರ ವಿಷಗಳನ್ನು ತರಿಸುತ್ತಿದ್ದಾರಂತೆ. ಅವುಗಳ ಸಿಂಚನದಿಂದಾಗಿ ಜೇಡ, ಜೇನ್ನೊಣ, ಎರೆಹುಳ, ಇರುವೆ, ಕಪ್ಪೆ, ಚಿಟ್ಟೆ, ಓತಿಕ್ಯಾತ, ಗುಬ್ಬಚ್ಚಿ, ಗೀಜಗ, ಸೂರಕ್ಕಿ ಹೀಗೆ ಎಲ್ಲ ನೆಲಮೂಲದ ಜೀವಲೋಕದ ಮಾರಣ ಹೋಮ ಆಗುತ್ತಿದೆ.

(ಇಂಗ್ಲಂಡಿನ ಬದುಕಿನ ಅನುಕರಣೆಯ ಬಗ್ಗೆ ಗಾಂಧೀಜಿ ಏನು ಹೇಳಿದ್ದರೆಂಬುದೂ ನಮಗಿಲ್ಲಿ ನೆನಪಾಗಬೇಕು. ಅವರು ಅದನ್ನು ಹೇಳುವಾಗ ಇಡೀ ದೇಶದ ಜನಸಂಖ್ಯೆ 30 ಕೋಟಿ ಇತ್ತು. ಇಂದು ಸುಮಾರು 30 ಕೋಟಿ ಜನರಿಗೆ ಐಷಾರಾಮಿ ಜೀವನ ಕೈಗೆಟುಕಿದೆ. ಮಿಡತೆ ದಾಳಿಯ ಪರಿಣಾಮ ಇತರ ನೂರು ಕೋಟಿ ಜನರ ಮೇಲೆ ಕಾಣತೊಡಗಿದೆ.)

ಮೊನ್ನೆ ಮೇ 22ರಂದು ಜೀವಿವೈವಿಧ್ಯ ರಕ್ಷಣೆಯ ದಿನವಾಗಿತ್ತು; ಬರಲಿರುವ ಜೂನ್ 5ರ ವಿಶ್ವಪರಿಸರ ದಿನಕ್ಕೂ ಜೀವಿವೈವಿಧ್ಯ ರಕ್ಷಣೆಯೇ ಘೋಷವಾಕ್ಯವಾಗಿದೆ. ಕೋವಿಡ್‌ ಅನ್ನಿ, ಆಂಫನ್‌ ಅನ್ನಿ, ಮಿಡತೆ ಅನ್ನಿ, ಇಡೀ ದೇಶವೇ ವಿಷಸಿಂಚನದ ಭರಾಟೆಯಲ್ಲಿದೆ.

ಚಿಂತಿಸಬೇಕಿಲ್ಲ. ಜೂನ್ 5ರ ಸರಕಾರಿ ಜಾಹೀರಾತುಗಳಲ್ಲಿ ಜೀವಿವೈವಿಧ್ಯ ರಕ್ಷಣೆಯ ಘೋಷಣೆ ಅದ್ಧೂರಿಯಾಗಿ ನಡೆಯಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ

Published

on

ಸುದ್ದಿದಿನ,ದಾವಣಗೆರೆ:ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತರುತ್ತಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ. ಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

ದಾವಣಗೆರೆಯ ಬಾಷಾನಗರ,ಆನೆಕೊಂಡ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಮನೆಮನೆಗೆ ಭೇಟಿ ನೀಡಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಪರವಾಗಿ ಮತಯಾಚನೆ ಮಾಡಿ ನಂತರ ಮಾತನಾಡಿದರು.

ರಾಜ್ಯದಲ್ಲಿ ನಿಮ್ಮದೇ ಕಾಂಗ್ರೆಸ್ ಸರ್ಕಾರವಿದ್ದು, ಅದನ್ನು ಗೆಲ್ಲಿಸುವ ಜವಾಬ್ದಾರಿ ನಿಮ್ಮದೆ ಎಂದ ಅವರು ಶಾಮನೂರು ಕುಟುಂಬವು ಸದಾ ಜನರ ಸಮಸ್ಯೆಗಳ ಪರಿಹಾರಕ್ಕೆ ನಿಂತುಕೊಳ್ಳುತ್ತದೆ ಎಂಬ ಭರವಸೆಯನ್ನೂ ನೀಡಿದರು.

ಪ್ರಚಾರದ ವೇಳೆ ಸ್ಥಳೀಯರು ತಮ್ಮ ಬೇಡಿಕೆಗಳ ಮನವಿಯನ್ನು ಸಲ್ಲಿಸಿದರ ಬಗ್ಗೆ ಜನರಿಗೆ ಭರವಸೆ ನೀಡಿದರು. ಜನರ ಹಕ್ಕುಪತ್ರದ ಸಮಸ್ಯೆಗಳು ಕುರಿತು ಈ ಹಿಂದೆ ಶಾಮನೂರು ಶಿವಶಂಕರಪ್ಪ ಅವರು ಸಾಕಷ್ಟು ಸಮಸ್ಯೆಗಳನ್ನು ಪರಿಹರಿಸಿದ್ದರು.ಈಗ ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಜನರ ಎಲ್ಲಾ ಸಮಸ್ಯೆಗಳ ಪರಿಹಾರ ಮಾಡುತ್ತಿದ್ದಾರೆ ಎಂದರು.

ಯುವ ನಾಯಕ ಸಮರ್ಥ್ ಶಾಮನೂರು ಕುರಿತು ಮಾತನಾಡಿದ ಅವರು ಸಮರ್ಥ್ ಜನರೊಂದಿಗೆ ಉತ್ತಮ ಒಡನಾಟ ಹೊಂದಿರುವುದಾಗಿ ತಿಳಿಸಿದರು. ಚುನಾವಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಭಾಗವಹಿಸಿ, ಏಪ್ರಿಲ್ 9 ರಂದು ಮತಗಟ್ಟೆಗೆ ಬಂದು ಕ್ರಮ ಸಂಖ್ಯೆ 3ರ ‘ಹಸ್ತ’ ಚಿಹ್ನೆಗೆ ಮತ ಹಾಕಿ ಸಮರ್ಥ್ ಅವರನ್ನು ಗೆಲ್ಲಿಸಬೇಕೆಂದು ಕರೆ ನೀಡಿದರು. ಈ ವೇಳೆ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಸಾಕಷ್ಟು ಸಂಖ್ಯೆಯಲ್ಲಿ ಜನರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ

Published

on

~ಗೋವರ್ಧನ ನವಿಲೇಹಾಳು

ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್‌ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ. ಅಮೆರಿಕಾ CENTCOM ವಿಡಿಯೋಗಳಲ್ಲಿ ಡ್ರೋನ್, ಟ್ಯಾಂಕ್ ಮತ್ತು ಮಿಸೈಲ್ ಲಾಂಚರ್‌ಗಳನ್ನು “ಯಶಸ್ವಿಯಾಗಿ” ನಾಶಪಡಿಸುತ್ತಿರುವುದನ್ನು ತೋರಿಸುತ್ತಿದೆ.

ಈ ಯುದ್ಧವು ನಾಗರಿಕರ ಮೇಲಿನ ನೇರ ಹಲ್ಲೆಯಾಗಿ ಮಾರ್ಪಟ್ಟಿದೆ. ಅಂತರಾಷ್ಟ್ರೀಯ ಮಾಧ್ಯಮಗಳು – ಅಲ್ ಜಜೀರಾ, ಯುರೋನ್ಯೂಸ್, ದಿ ಎಕಾನಮಿಸ್ಟ್, ಯುಎನ್ ವರದಿಗಳು – ಇದನ್ನು ಸ್ಪಷ್ಟವಾಗಿ ತೋರಿಸುತ್ತಿವೆ. ಇದು ಯುದ್ಧವಲ್ಲ; ಇದು ಮಾನವೀಯತೆಯ ವಿರುದ್ಧದ ಅಪರಾಧ.

ಫೆಬ್ರುವರಿ 28ರಂದು ಆರಂಭವಾದ ಆಪರೇಷನ್ ಎಪಿಕ್ ಫ್ಯೂರಿಯಲ್ಲಿ 900ಕ್ಕೂ ಹೆಚ್ಚು ದಾಳಿಗಳು ನಡೆದವು. ಇರಾನ್ ನಾಯಕತ್ವ, ನ್ಯೂಕ್ಲಿಯರ್ ಸೌಲಭ್ಯಗಳು, ಮಿಸೈಲ್ ಗಳನ್ನು ಹೊಡೆದು ಹಾಕುವುದು ನಮ್ಮ ಗುರಿ ಎಂದು ಅಮೆರಿಕಾ-ಇಸ್ರೇಲ್ ಹೇಳುತ್ತವೆ. ಆದರೆ ವಾಸ್ತವವು ಭಯಾನಕ. ಇರಾನ್ ಆರೋಗ್ಯ ಸಚಿವಾಲಯದ ಪ್ರಕಾರ 2,076ಕ್ಕೂ ಹೆಚ್ಚು ಜನ ಸತ್ತಿದ್ದಾರೆ, 26,500ಕ್ಕೂ ಹೆಚ್ಚು ಗಾಯಗೊಂಡಿದ್ದಾರೆ. ಇದರಲ್ಲಿ ಬಹುಪಾಲು ನಾಗರಿಕರು. ಮಿನಾಬ್‌ನ ಪ್ರಾಥಮಿಕ ಶಾಲೆಯ ಮೇಲಿನ ದಾಳಿಯಲ್ಲಿ 168-175 ಮಕ್ಕಳು (ಹೆಚ್ಚಿನವರು ಹುಡುಗಿಯರು) ಸಾವಿಗೀಡಾದರು – ವಿಯೆಟ್ನಾಮ್‌ನ ಮೈ ಲಾಯ್ ಹತ್ಯಾಕಾಂಡದ ನಂತರ ಅಮೆರಿಕಾ ಸೈನ್ಯದ ಅತಿದೊಡ್ಡ ಮಕ್ಕಳ ಸಾವು ಎಂದು ರಿಫ್ಯೂಜೀಸ್ ಇಂಟರ್ನ್ಯಾಷನಲ್ ಹೇಳಿದೆ. ಇಸ್ಫಹಾನ್‌ನಲ್ಲಿ ಉಕ್ಕು ಘಟಕಗಳು, ಔಷಧಿ ಸಂಶೋಧನಾ ಕೇಂದ್ರಗಳು ನಾಶವಾಗಿವೆ. ಯುಎನ್ ಹ್ಯೂಮನ್ ರೈಟ್ಸ್ ಚೀಫ್ ವೋಲ್ಕರ್ ಟರ್ಕ್ ಅವರು “ನಾಗರಿಕರು ಈ ಯುದ್ಧದ ಬಲಿಪಶುಗಳಾಗಿದ್ದಾರೆ” ಎಂದು ಖಂಡಿಸಿದ್ದಾರೆ. 67,414 ನಾಗರಿಕ ಸೈಟ್‌ಗಳು (498 ಶಾಲೆಗಳು, 236 ಆಸ್ಪತ್ರೆಗಳು) ಹಾನಿಗೊಳಗಾಗಿವೆ.

ಇರಾನ್ ಕೂಡ ಇಸ್ರೇಲ್ ಮೇಲೆ ಮಿಸೈಲ್ ದಾಳಿ ನಡೆಸಿದೆ. ಕೇಂದ್ರ ಇಸ್ರೇಲ್‌ನಲ್ಲಿ ಸ್ಫೋಟಗಳು, 24 ಇಸ್ರೇಲಿ ನಾಗರಿಕರು ಸತ್ತಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ತೈಲ ಘಟಕಗಳು, ವಿಮಾನ ನಿಲ್ದಾಣಗಳ ಮೇಲೆ ದಾಳಿ. ಆದರೆ ಸಾವುಗಳ ಪ್ರಮಾಣದಲ್ಲಿ ಇರಾನ್‌ನ ನಷ್ಟ ಅಪಾರ. ಲೆಬನಾನ್‌ನಲ್ಲಿ ಹೆಜ್ಬೊಲ್ಲಾಹ್ ಸಂಘರ್ಷದಿಂದ 1,318 ಜನ ಸತ್ತಿದ್ದಾರೆ. ಯುಎನ್‌ಎಚ್‌ಸಿಆರ್ ಪ್ರಕಾರ 3.2 ಮಿಲಿಯನ್ ಇರಾನಿಯನ್ನರು ಒಳನಾಡಿನ ನಿರಾಶ್ರಿತರಾಗಿದ್ದಾರೆ. ಇದು ಇರಾನ್‌ನ 3% ಜನಸಂಖ್ಯೆ. ಆಫ್ಘನ್ ನಿರಾಶ್ರಿತರು (1.65 ಮಿಲಿಯನ್) ಇನ್ನಷ್ಟು ಅಪಾಯದಲ್ಲಿದ್ದಾರೆ. ವಿದ್ಯುತ್ ಸರಬರಾಜು, ಔಷಧಿ, ಆಹಾರ, ಇಂಧನದ ಕೊರತೆ ತೀವ್ರವಾಗಿದೆ. ಯುನೆಸ್ಕೋ ವಿಶ್ವ ಪರಂಪರೆ ಸ್ಥಳಗಳು ಹಾನಿಗೊಳಗಾಗಿವೆ.

ಅಮೆರಿಕಾದ ನಡೆಯನ್ನು ತೀಕ್ಷ್ಣವಾಗಿ ವಿಮರ್ಶಿಸಬೇಕು. ಟ್ರಂಪ್ ಸರ್ಕಾರವು “ಸ್ವಯಂರಕ್ಷಣೆ” ಮತ್ತು “ಇರಾನ್ ಅಪಾಯವನ್ನು ತೊಡೆದುಹಾಕುವುದು” ಎಂದು ನ್ಯಾಯೀಕರಿಸುತ್ತಿದೆ. ಆದರೆ ಅವರು ಸೇತುವೆಗಳು, ವಿದ್ಯುತ್ ಘಟಕಗಳನ್ನು ಗುರಿಯಾಗಿಸುತ್ತಿದ್ದಾರೆ – ಇದು ನಾಗರಿಕ ಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸುತ್ತದೆ. ಯುದ್ಧದ ವೆಚ್ಚ ದಿನಕ್ಕೆ ಶತಕೋಟಿ ಡಾಲರ್‌ಗಳು. ಹಾರ್ಮುಜ್ ಜಲಸಂಧಿ ಪ್ರಾಯಶಃ ಮುಚ್ಚುವಿಕೆಯಿಂದ ಜಗತ್ತಿನ ತೈಲ ಸರಬರಾಜು ಅಸ್ತವ್ಯಸ್ತ. ತೈಲ ಬೆಲೆಗಳು ಏರಿಕೆಯಾಗಿ, ಅಮೆರಿಕಾದಲ್ಲಿ ಪೆಟ್ರೋಲ್ ಬೆಲೆ 50 ಸೆಂಟ್‌ಗಳಷ್ಟು ಏರಿದೆ. ಆಫ್ರಿಕಾ, ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಆಹಾರ, ಗೊಬ್ಬರ, ಔಷಧಿ ಬೆಲೆಗಳು ಆಕಾಶ ಸ್ಪರ್ಶಿಸುತ್ತಿವೆ. ಇದು ಬಡ ಜನರ ಮೇಲಿನ ಪರೋಕ್ಷ ಹಲ್ಲೆ. ಟ್ರಂಪ್ ಅವರ ಭಾಷಣಗಳಲ್ಲಿ ಸ್ಪಷ್ಟ ಯೋಜನೆ ಇಲ್ಲ – “ನನಗೆ ಅನಿಸಿದಾಗ” ಯುದ್ಧ ಕೊನೆಗೊಳ್ಳುತ್ತದೆ ಎಂದು ಹೇಳುತ್ತಾರೆ. ಇದು ಅನಿಯಂತ್ರಿತ ಆಕ್ರಮಣವಲ್ಲದೆ ಬೇರೇನು?

ಅಂತರಾಷ್ಟ್ರೀಯ ಮಾಧ್ಯಮಗಳು ಎರಡು ಮುಖಗಳನ್ನು ತೋರಿಸುತ್ತವೆ. ಪಶ್ಚಿಮ ಮಾಧ್ಯಮಗಳು ಇರಾನ್‌ನ “ಅಪಾಯ”ವನ್ನು ಒತ್ತಿ ಹೇಳುತ್ತವೆಯಾದರೆ, ಅಲ್ ಜಜೀರಾ ಮತ್ತು ಮಧ್ಯಪ್ರಾಚ್ಯ ಮಾಧ್ಯಮಗಳು ಅಮೆರಿಕಾ-ಇಸ್ರೇಲ್‌ನ “ಆಕ್ರಮಣ”ವನ್ನು ಖಂಡಿಸುತ್ತವೆ. ಆದರೆ ಸತ್ಯ ಒಂದೇ: ನಾಗರಿಕರು ಬಲಿಪಶುಗಳಾಗಿದ್ದಾರೆ. ಜನೆವಾ ಕನ್ವೆನ್ಷನ್‌ಗಳು ನಾಗರಿಕ ಗುರಿಗಳನ್ನು ರಕ್ಷಿಸುತ್ತವೆ, ಆದರೆ ಇಲ್ಲಿ “ಕೊಲಾಟೆರಲ್ ಡ್ಯಾಮೇಜ್” ಎಂದು ಸುಲಭವಾಗಿ ಕರೆಯಲಾಗುತ್ತಿದೆ. ಇಸ್ರೇಲ್‌ನ ಸುರಕ್ಷತೆಯ ಅಗತ್ಯವನ್ನು ಒಪ್ಪಿಕೊಂಡರೂ, ಇರಾನ್ ಜನರನ್ನು “ಶಿಲಾ ಯುಗಕ್ಕೆ” ತಳ್ಳುವುದು ನೈತಿಕತೆಯಲ್ಲ. ಇರಾನ್ ರೆಜಿಮ್‌ನ ದಮನಕಾರಿ ನೀತಿಗಳು ಖಂಡನೀಯವೇ, ಆದರೆ ಯುದ್ಧವು ಆ ನಿರಂಕುಶತೆಯನ್ನು ಬಲಪಡಿಸುತ್ತಿದೆ, ಜನರನ್ನು ಒಗ್ಗೂಡಿಸುತ್ತಿದೆ.

ದೀರ್ಘಕಾಲೀನ ಪರಿಣಾಮಗಳು ಭಯಾನಕವಾಗಿವೆ. ಹೇಗೆಂದರೆ 3.2 ಮಿಲಿಯನ್ ನಿರಾಶ್ರಿತರು, ಆರೋಗ್ಯ ಸಂಕಷ್ಟ, ಮಾನಸಿಕ ಆಘಾತ, ಬಡತನದ ಏರಿಕೆ. ಯುದ್ಧವು ಮುಂದುವರಿದರೆ ಹಸಿವು, ರೋಗಗಳು, ಪರಿಸರ ವಿನಾಶ ತೀವ್ರವಾಗುತ್ತವೆ. ಹಾರ್ಮುಜ್ ಮುಚ್ಚುವಿಕೆ ಜಗತ್ತಿನ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳಲಿದೆ. ಅಂತರಾಷ್ಟ್ರೀಯ ಸಮುದಾಯ ಈಗಲೇ ಎಚ್ಚರಗೊಳ್ಳಬೇಕು: ಸೆಸ್‌ಫೈರ್, ಮಾನವೀಯ ಸಹಾಯದ ಮುಕ್ತ ಪ್ರವೇಶ, ಯುಎನ್ ಮಧ್ಯಸ್ಥಿಕೆಯ ಸಂಧಾನ. ಡಿಪ್ಲಾಮಸಿಗೆ ಬದಲಾಗಿ ಬಾಂಬ್‌ಗಳನ್ನು ಆಯ್ಕೆ ಮಾಡುವುದು ಅಮೆರಿಕಾದ ಶಕ್ತಿಯನ್ನು ಅಪಹಾಸ್ಯಗೊಳಿಸುತ್ತಿದೆ.

ಯುದ್ಧವು ಯಾರಿಗೂ ಗೆಲುವು ತರುವುದಿಲ್ಲ. ಇರಾನ್‌ನ ಮಕ್ಕಳ ಸಾವುಗಳು, ಇಸ್ರೇಲ್‌ನ ಗಾಯಗೊಂಡ ಕುಟುಂಬಗಳು, ಗಲ್ಫ್‌ನ ಆರ್ಥಿಕ ಸಂಕಷ್ಟಗಳು ಮನಕಲಕುತ್ತವೆ. ರಾಜಕೀಯ ಲೆಕ್ಕಾಚಾರಗಳು ಮಾನವ ಜೀವಗಳಿಗಿಂತ ದೊಡ್ಡವಲ್ಲ. ಅಮೆರಿಕಾವು ತನ್ನ ಅಪಾರ ಶಕ್ತಿಯನ್ನು ಶಾಂತಿ ಮತ್ತು ಸಂಧಾನಕ್ಕೆ ಬಳಸಬೇಕು. ಇಲ್ಲವಾದರೆ ಈ ಯುದ್ಧವು ಅಮಾಯಕ ಜೀವಗಳ ಭವಿಷ್ಯವನ್ನು ನಾಶಪಡಿಸುತ್ತದೆ. ಮಾನವೀಯತೆಯ ದೃಷ್ಟಿಯಿಂದ, ಈ ಅಮಾನುಷ ಆಕ್ರಮಣವನ್ನು ತಕ್ಷಣ ನಿಲ್ಲಿಸಿ. ಶಾಂತಿಯೇ ಏಕೈಕ ಮಾರ್ಗ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ

Published

on

ಸುದ್ದಿದಿನ,ದಾವಣಗೆರೆ:ಮುಖ್ಯಮಂತ್ರಿಗಳೇ, ಒಳ್ಳೆಯ ಕಾರಣಕ್ಕೆ ನಿಮ್ಮ ಸರಕಾರ ಯಾವಾಗ ಸುದ್ದಿಯಾಗಿದೆ ಹೇಳಿ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಸರಕಾರದ ದುರಾಡಳಿತ ಸಂಬಂಧ ಆರೋಪ ಪಟ್ಟಿ ಬಿಡುಗಡೆ ಮಾಡಿ ಅವರು ಇಂದು ಮಾಧ್ಯಮಗಳ ಜೊತೆ ಮಾತನಾಡಿದರು. ಕಳೆದ 3 ವರ್ಷಗಳಲ್ಲಿ ಈ ಸರಕಾರ ಒಳ್ಳೆಯ ಕಾರಣಕ್ಕೆ ಯಾವಾಗ ಹೆಸರಾಗಿತ್ತು ಎಂದು ಹೇಳಲೂ ಸಿಗುವುದಿಲ್ಲ. ಭ್ರಷ್ಟಾಚಾರ, ಬೆಲೆ ಏರಿಕೆ, ದರೋಡೆ ಪ್ರಕರಣಗಳು ಸುದ್ದಿಯಾದವು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಸುಮಾರು 3 ವರ್ಷಗಳಾಗಿವೆ. ಈ ಅವಧಿಯ ಭ್ರಷ್ಟಾಚಾರ, ಬೆಲೆ ಏರಿಕೆ, ದುರಾಡಳಿತ ಕುರಿತ ಚಾರ್ಜ್ ಶೀಟನ್ನು ಇವತ್ತು ಬಿಡುಗಡೆ ಮಾಡಿದ್ದೇವೆ ಎಂದರು.

ಡ್ರಗ್ಸ್ ವಿಚಾರದಲ್ಲಿ ರಾಜ್ಯ ಸುದ್ದಿಯಾಗಿದೆ. ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ ಇದೆ. ಸರಕಾರಿ ನೌಕರರು ಆತ್ಮಹತ್ಯೆ ಮಾಡಿಕೊಂಡರು. ಬಾಣಂತಿಯರು, ಹಸುಗೂಸುಗಳ ಸರಣಿ ಸಾವಿನ ಕಾರಣಕ್ಕೆ ಈ ಸರಕಾರ ಸುದ್ದಿಯಲ್ಲಿತ್ತು. ಸರಕಾರಿ ಆಸ್ಪತ್ರೆಯಲ್ಲಿ ಔಷಧಿ ಕೊರತೆಗೆ ಈ ಸರಕಾರ ಸುದ್ದಿಯಲ್ಲಿತ್ತು. ಅಂಗನವಾಡಿ ಶಿಕ್ಷಕಿಯರ ಚಳವಳಿ, ಆಶಾ ಕಾರ್ಯಕರ್ತೆಯರ ಚಳವಳಿ, ಅತಿಥಿ ಉಪನ್ಯಾಸಕರಿಂದ ಸಂಬಳ ಸಿಗುತ್ತಿಲ್ಲವೆಂದು ಹೋರಾಟ, ಗುತ್ತಿಗೆ ನೌಕರರ ಹೋರಾಟ- ಹೀಗೆ ಚಳವಳಿಗಳ ಕಾಟಕ್ಕೆ ಈ ಸರಕಾರ ಸುದ್ದಿಯಲ್ಲಿದೆ ಎಂದು ವ್ಯಂಗ್ಯವಾಡಿದರು.

ಒಳ್ಳೆಯ ಕಾರಣಕ್ಕೆ ಒಂದು ದಿನವೂ ಸುದ್ದಿಯಲ್ಲಿ ಇರಲಿಲ್ಲ

ಕಳೆದ 3 ವರ್ಷದಲ್ಲಿ ಕೆಟ್ಟ ಕಾರಣಕ್ಕಾಗಿ ಈ ಸರಕಾರ ಸುದ್ದಿಯಲ್ಲಿದೆಯೇ ಹೊರತು ಒಳ್ಳೆಯ ಕಾರಣಕ್ಕೆ ಒಂದು ದಿನವೂ ಸುದ್ದಿಯಲ್ಲಿ ಇರಲಿಲ್ಲ ಎಂದು ವಿಶ್ಲೇಷಿಸಿದರು. ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಬಲಿಯಾದವರು ನೂರಾರು ಜನ; ರಸ್ತೆ ಗುಂಡಿ ಕಾರಣಕ್ಕೆ ಈ ಸರಕಾರ ಸುದ್ದಿಯಲ್ಲಿತ್ತು. ಹೀಗೆ ಪ್ರತಿನಿತ್ಯ ಸರಕಾರ ಸುದ್ದಿಯಲ್ಲಿ ಇರುವುದು ಕೇವಲ ಕೆಟ್ಟ ಕಾರಣಕ್ಕಾಗಿ ಎಂದು ಆರೋಪಿಸಿದರು. ಅಭಿವೃದ್ಧಿ ಕೆಲಸ ಮಾಡಿದ್ದಕ್ಕಾಗಿ ಒಂದು ದಿನವೂ ಸುದ್ದಿಯಲ್ಲಿ ಇರಲಿಲ್ಲ ಎಂದು ಆಕ್ಷೇಪಿಸಿದರು.

ಮುಡಾ, ವಾಲ್ಮೀಕಿ ನಿಗಮದ ಹಗರಣ ಮಾನಗೆಟ್ಟ ಕೆಲಸವಲ್ಲವೇ?

ಮುಖ್ಯಮಂತ್ರಿಗಳು ಬಿಜೆಪಿಯವರು ಮಾನಗೆಟ್ಟವರು ಎಂದು ಭಾಷಣದಲ್ಲಿ ಹೇಳಿದ್ದಾರೆ. ಯಾರು ಮುಖ್ಯಮಂತ್ರಿಗಳೇ ಮಾನಗೆಟ್ಟವರು? ಮುಡಾ ಹಗರಣ ಯಾರ ಮೇಲೆ ಬಂತು? ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ನಿಮ್ಮ ಸರಕಾರದ ಸಚಿವರೇ ರಾಜೀನಾಮೆ ಕೊಡಬೇಕಾಯಿತಲ್ಲವೇ? ಇದು ಮಾನಗೆಟ್ಟ ಕೆಲಸವಲ್ಲವೇ? ಎಂದು ಕೇಳಿದರು. ವಾಲ್ಮೀಕಿ ಸಮುದಾಯದ ಅಭಿವೃದ್ಧಿಗೆ ಬಳಕೆ ಆಗಬೇಕಾದ ಹಣವನ್ನು ನಿಮ್ಮ ಒಬ್ಬ ಸಚಿವರು ಹೆಂಡತಿಗೆ ಒಡವೆ ಕೊಡಿಸಲು, ಚುನಾವಣೆಗೆ ಬಾರ್ ನಿಂದ ಎಣ್ಣೆ ಸರಬರಾಜು ಮಾಡಲು ಹಣ ಬಳಸಿದ್ದು ಮರ್ಯಾದೆ ಇದ್ದವರು ಮಾಡುವ ಕೆಲಸವೇ ಎಂದು ಕೇಳಿದರು.

ಮರ್ಯಾದೆ ಇದ್ದವರು ಅಧಿಕಾರಕ್ಕೆ ಅಂಟಿಕೊಳ್ಳುವರೇ?
ನೀವು ಬಿಜೆಪಿ ಮೇಲೆ ಶೇ 40 ಆರೋಪ ಹೊರಿಸಿ ಅಧಿಕಾರಕ್ಕೆ ಬಂದಿದ್ದೀರಿ. ಗುತ್ತಿಗೆದಾರರು ಶೇ 60 ಕಮಿಷನ್‍ನ ಸರಕಾರ ಎಂದು ನಿಮ್ಮ ಸರಕಾರದ ಮೇಲೆ ಆರೋಪ ಮಾಡಿದ್ದಾರಲ್ಲವೇ? ಮರ್ಯಾದೆ ಇದ್ದವರು ಆ ಆರೋಪ ಕೇಳಿಯೂ ಅಧಿಕಾರಕ್ಕೆ ಅಂಟಿಕೊಳ್ಳುತ್ತಾರಾ ಎಂದು ಪ್ರಶ್ನೆಯನ್ನು ಮುಂದಿಟ್ಟರು. ನಿಮ್ಮ ಅಬಕಾರಿ ಸಚಿವರ ಮೇಲೆ ಬಾರ್ ಮಾಲೀಕರು ತಿಂಗಳ ಮಾಮೂಲಿ ಕೇಳುವ ಕುರಿತು ಆರೋಪ ಮಾಡಿದ್ದಾರಲ್ಲವೇ? ಇದು ಮರ್ಯಾದೆ ಇದ್ದವರು ಮಾಡುವ ಕೆಲಸವೇ? ಮಾನಗೆಟ್ಟವರು ಮಾಡುವ ಕೆಲಸವೇ ಎಂದು ಪ್ರಶ್ನೆ ಹಾಕಿದರು.

ಮುಖ್ಯಮಂತ್ರಿಗಳೇ, ಇಡೀ ಸಂಪುಟದಲ್ಲಿ ಮಾನಗೆಟ್ಟವರು ಇದ್ದಾರೆಯೇ ಹೊರತು ಮರ್ಯಾದೆ ಇದ್ದವರು ಯಾರಿದ್ದಾರೆ ಹೇಳಿ ಎಂದು ಕೇಳಿದರು. ಮಾನಗೆಟ್ಟ ಕೆಲಸ ಮಾಡುವವರನ್ನು ಸಚಿವರನ್ನಾಗಿ ಮಾಡಿಕೊಂಡು, ಶೇ 60ರ ಆರೋಪ ಹೊತ್ತುಕೊಂಡು ನೀವು ಬಿಜೆಪಿ ವಿರುದ್ಧ ಮಾನಗೆಟ್ಟ ಬಿಜೆಪಿ ಎಂದು ಆರೋಪ ಮಾಡುತ್ತೀರಲ್ಲವೇ ಎಂದು ಪ್ರಶ್ನೆಯನ್ನು ಮುಂದಿಟ್ಟರು.

ನಿಮ್ಮದು ದರೋಡೆಕೋರ ಸರಕಾರವಲ್ಲವೇ?

ರಾಜ್ಯದ ಉಸ್ತುವಾರಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲಾ ಅವರು ಬಿಜೆಪಿಯನ್ನು ಜೇಬುಗಳ್ಳರು ಎಂದಿದ್ದಾರೆ. ನೀವು ಬಿಜೆಪಿ ಸರಕಾರವನ್ನು ಜೇಬುಗಳ್ಳರು ಎಂದು ಕರೆಯುವುದಾದರೆ ಯುದ್ಧದ ಕಾರಣಕ್ಕೆ ಕೆಲವು ಬೆಲೆ ಏರಿಕೆಗಳಾಗಿವೆ. ನಿಮ್ಮ ಸರಕಾರವನ್ನು ದರೋಡೆಕೋರ ಸರಕಾರ ಎಂದು ಕರೆಯುವುದರಲ್ಲಿ ತಪ್ಪೇನಿದೆ ಎಂದು ಕೇಳಿದರು. ನಿಮ್ಮ ಸರಕಾರ ಯಾವ್ಯಾವ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದೆ ಎಂಬ ಪಟ್ಟಿ ಕೊಡಲೇ ಎಂದು ಪ್ರಶ್ನೆಯನ್ನು ಮುಂದಿಟ್ಟರು.

20 ರೂ. ಸ್ಟಾಂಪ್ ಪೇಪರ್ ಮಾಯವಾಗಿದೆ..

ನಂದಿನಿ ಹಾಲಿನ ದರ ಏರಿಕೆ ಮಾಡಿದ್ದೀರಿ. ಪೆಟ್ರೋಲ್ ಮೇಲೆ 3 ರೂ. ಸೆಸ್, ಡೀಸೆಲ್ ಮೇಲೆ 5.08 ರೂ. ಸೆಸ್ ಹಾಕಿದ್ದೀರಿ. ಕೇಂದ್ರ ಸರಕಾರ ದರ ಇಳಸಿದರೆ ನೀವು ಸೆಸ್ ಹಾಕಿ ಅವರ ಲಾಭ ಜನರಿಗೆ ಸಿಗದಂತೆ ಮಾಡಿದ್ದೀರಿ ಎಂದು ಟೀಕಿಸಿದರು. ಬಸ್ ಪ್ರಯಾಣ ದರ ಶೇ 15, ಮೆಟ್ರೋ ದರ ಶೇ 50ರಷ್ಟು ಹೆಚ್ಚಿಸಿದ್ದೀರಿ. ಪ್ರತಿ ಯೂನಿಟ್ 4.50 ರೂ. ವಿದ್ಯುತ್ ದರವನ್ನು ರೂ 5.90 ಮಾಡಿದ್ದೀರಿ. ವಾಣಿಜ್ಯ ದರವನ್ನು 7 ರೂ.ಗೂ ಹೆಚ್ಚಳ ಮಾಡಲಾಗಿದೆ. ಅಬಕಾರಿ ಸುಂಕವನ್ನು ಶೇ 20ರಷ್ಟು ಏರಿಸಿದ್ದೀರಿ. ಸ್ಟಾಂಪ್ ಡ್ಯೂಟಿ ಹೆಚ್ಚಿಸಿದ್ದೀರಿ. 20 ರೂ. ಸ್ಟಾಂಪ್ ಪೇಪರ್ ಮಾಯವಾಗಿದೆ. ಅದರ ಜಾಗಕ್ಕೆ 100, 200 ರೂ.ಗಳ ಸ್ಟಾಂಪ್ ಪೇಪರ್ ಖರೀದಿಸಬೇಕಾಗಿದೆ. ನಮ್ಮ ಚಿನ್ನ ನಾವು ಒತ್ತೆ ಇಡಲು 0.5ರಷ್ಟು ಸ್ಟಾಂಪ್ ಡ್ಯೂಟಿ ಕಟ್ಟಬೇಕಾಗಿದೆ ಎಂದು ಆಕ್ಷೇಪಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending