ದಿನದ ಸುದ್ದಿ
ಮಿಡತೆ ದಾಳಿಯ ಪೂರ್ವಾಪರ : ಅದೂ ಯಾಕೊ ಕೊರೊನಾ ಥರಾ..!
- ನಾಗೇಶ್ ಹೆಗಡೆ
ಅತ್ತ ಪೂರ್ವಭಾರತದಲ್ಲಿ ಅಂಫನ್ ದಾಳಿ, ಇತ್ತ ದಿಲ್ಲಿಯ ಸುತ್ತ ಬಿಸಿಗಾಳಿಯ ದಾಳಿ, ಈಕಡೆ ಪಶ್ಚಿಮ ಭಾರತದಲ್ಲಿ ಮಿಡತೆ ದಾಳಿ. ಕೊರೊನಾ ಸಂದರ್ಭದಲ್ಲೇ ಬಂದೊದಗಿದ ಮಿಡತೆ ದಾಳಿ ಅದೆಷ್ಟು ರೀತಿಯಲ್ಲಿ ಕೊರೊನಾವನ್ನೇ ಹೋಲುತ್ತಿದೆ! ಯೋಗಾಸನದಲ್ಲಿ ಮಿಡತೆಯನ್ನು ಹೋಲುವ ‘ಶಲಭಾಸನ’ವೂ ಅದೇನನ್ನೋ ಸಂಕೇತಿಸುತ್ತಿದೆಯಲ್ಲ? ಮಿಡತೆ () ದಾಳಿ ಹೇಗಿರುತ್ತದೆ ಎಂಬುದನ್ನು ಅಕ್ಷರಗಳಲ್ಲಿ ಹಿಡಿಯೋಣ ಬನ್ನಿ.
ಮೋಡದ ವಿಶಾಲ ಚಾಪೆಯೊಂದು ಆಕಾಶದಲ್ಲಿ ತೇಲಿ ಬಂದಂತೆ ಕಾಣುತ್ತದೆ. ಅದೆಷ್ಟೊ ಕೋಟಿ ಮಿಡತೆಗಳು ಗಾಳಿಯಲ್ಲಿ ತೇಲಿ ಬರುವಾಗ ನೆಲಕ್ಕೆ ಕತ್ತಲು ಕವಿಯುತ್ತದೆ. ಹಾರಿ ಸುಸ್ತಾದ ಮರಿಮಿಡತೆ, ಮುದಿಮಿಡತೆಗಳು ನೆಲಕ್ಕಿಳಿಯುವಾಗ ಜಡಿಮಳೆ ಸುರಿದಂತಾಗುತ್ತದೆ.
ಅವು ಪೈರು, ಪೊದೆ, ಗಿಡಮರಗಳ ಮೇಲೆ ಕೂರಲು ತೊಡಗಿದರೆ ಹಸುರೆಲ್ಲ ಮುಚ್ಚಿಹೋಗಿ ಇಡೀ ಬೆಟ್ಟ ಕಂದುಬಣ್ಣಕ್ಕೆ ತಿರುಗುತ್ತದೆ. ಮಿಡತೆಗಳ ಭಾರಕ್ಕೆ ಗಿಡಗಳು ನೆಲಕ್ಕೆ ಬಾಗುತ್ತವೆ. ದೊಡ್ಡ ಮರಗಳ ಕೊಂಬೆಗಳೂ ಮುರಿದು ಬೀಳುತ್ತವೆ. ಅಷ್ಟೇಕೆ ಸಡಿಲ ಬೇರುಗಳ ಇಡೀ ಮರವೇ ನೆಲಕ್ಕೊರಗುತ್ತದೆ. ಬಿರುಗಾಳಿ ಹೆಪ್ಪುಗಟ್ಟಿದಂತೆ ಕಾಣುತ್ತದೆ.
ನೋಡನೋಡುತ್ತ ಗಿಡಗಳ ಮೇಲೆ ಕೂತು ಅವು ಮೂತಿಯನ್ನು ಒತ್ತಿ ಹಸುರನ್ನೂ ಕೆರೆಯತೊಡಗಿದರೆ ಮತ್ತೆ ಜಡಿಮಳೆಯ ಜರಜರ ಸದ್ದೇ ಬರುತ್ತಿರುತ್ತದೆ. ಎಲೆ, ಹೂವು, ಕಾಯಿ ಕೊನೆಗೆ ಹಸುರು ತೊಗಟೆಯನ್ನೂ ಮುಕ್ಕಿ ಅವು ಮೇಲಕ್ಕೆ ನೆಗೆದರೆ ನೆಲದ ಚಿತ್ರಣ ಬದಲಾಗುತ್ತದೆ. ಪೈರು-ಪೊದೆ-ಗಿಡ-ಮರಗಳೆಲ್ಲ ಒಣ ಪೊರಕೆಗಳಾಗುತ್ತವೆ. ಹಸುರನ್ನು ಆಧರಿಸಿದ ಇತರ ಜೀವಿಗಳ ಪರಿಸ್ಥಿತಿಯನ್ನು ಕೇಳುವುದೇ ಬೇಡ.
ಮಿಡತೆ ದಾಳಿಯ ಭಯಾನಕತೆ ಹೇಗಿರುತ್ತದೆ ಎಂಬುದು ಮಹಾತ್ಮಾ ಗಾಂಧಿಯವರಿಗೂ ಗೊತ್ತಿತ್ತು: ‘”ಭಾರತದ 30 ಕೋಟಿ ಪ್ರಜೆಗಳು ಬ್ರಿಟಿಷರ ಹಾಗೆ ಐಷಾರಾಮಿ ಜೀವನವನ್ನು ಬಯಸಿದರೆ ಇಡೀ ಪ್ರಪಂಚವೇ ಮಿಡತೆ ದಾಳಿಗೆ ತುತ್ತಾದಂತೆ ಬೋಳು ಬಯಲಾದೀತು” ಎಂದು ಅವರು ಎಚ್ಚರಿಸಿದ್ದರು.
ಮಿಡತೆಗಳ ಈ ದುರ್ದಾಳಿಯ ವಿವರಗಳು ವೇದದಲ್ಲೂ ಇವೆ, ಬೈಬಲ್ಲಿನಲ್ಲೂ ಇವೆ, ಕುರಾನ್ನಲ್ಲೂ ಇವೆ. ಅದನ್ನು ಆಮೇಲೆ ನೋಡೋಣ. ಈಗ ವಿಜ್ಞಾನಿಗಳು ಕಂಡ ಕೆಲವು ಸ್ವಾರಸ್ಯ ಇಲ್ಲಿದೆ:
ಸಾಮಾನ್ಯ ದಿನಗಳಲ್ಲಿ ಮರುಭೂಮಿಯ ಕುರುಚಲು ಪೊದೆಗಳಲ್ಲಿ ಅಲ್ಲೊಂದು ಇಲ್ಲೊಂದು ಮಿಡತೆ ತನ್ನ ಪಾಡಿಗೆ ತಾನಿರುತ್ತದೆ. ಆದರೆ ಒಣಹವೆ, ಸೆಕೆದಿನಗಳು ಹೆಚ್ಚಾದ ಹಾಗೆ, ತಿನ್ನಲು ಏನೂ ಇಲ್ಲದ ಪರಿಸ್ಥಿತಿ ಬಂತೆಂದರೆ ನೋಡಿ. ಬದುಕುಳಿಯುವ ಒಂದು ವಿಲಕ್ಷಣ ವಿಕಾಸ ಸೂತ್ರ ಆಗ ಜಾರಿಗೆ ಬರುತ್ತದೆ.
ಬದುಕಿಗೆ ಸಂಕಷ್ಟ ಬಂದಾಗ ಒಂಟೊಂಟಿ ಮಿಡತೆಗಳ ಮಿದುಳಿನಲ್ಲಿ ಸೆರೊಟೊನಿನ್ ಎಂಬ ರಸ ಉಕ್ಕುತ್ತದೆ. ಅದುವರೆಗೆ ಒಂಟಿಯಾಗಿ ಬದುಕುತ್ತಿದ್ದ ನೂರಾರು ಮಿಡತೆಗಳು ಗುಂಪಾಗಿ ಸೇರತೊಡಗುತ್ತವೆ. ಏನೋ ಸಿಗ್ನಲ್ ಸಿಕ್ಕಂತೆ ಒಟ್ಟಿಗೆ ನೆಗೆಯುತ್ತವೆ.
ಆಗಸ್ಟ್ 15ರ ಬೆಳಿಗ್ಗೆ ಎಲ್ಲ ಮನೆಗಳ ಒಂಟೊಂಟಿ ಮಕ್ಕಳೂ ಶಾಲೆಗೆ ಜಮಾಯಿಸಿ ಜನಗಣ ಮನ ಹಾಡುತ್ತ ಪ್ರಭಾತಫೇರಿಗೆ ಹೊರಡುವ ಹಾಗೆ.
ಅಥವಾ ಯಾರೋ ಕಿಂದರಜೋಗಿಯೊಬ್ಬ ತುತ್ತೂರಿ ಊದಿ ಎಲ್ಲ ಮಿಡತೆಗಳನ್ನೂ ಎಬ್ಬಿಸಿ ಹೊರಡಿಸಿದ ಹಾಗೆ.
(ಗೆದ್ದಲುಗಳಲ್ಲೂ ಇಂಥ ವೈಚಿತ್ರ್ಯ ಸಂಭವಿಸುತ್ತದೆ. ಚುನಾವಣೆಯಲ್ಲಿ ಟಿಕೆಟ್ ಸಿಗದ ನಾಯಕನ ಹಾಗೆ ಒಂಟಿ ಗೆದ್ದಲುಗಳು ಮುಖಮುಚ್ಚಿಕೊಂಡು ಅಲ್ಲಿ ಇಲ್ಲಿ ಗೊತ್ತುಗುರಿ ಇಲ್ಲದೆ ಅಂಡಲೆಯುತ್ತವೆ; ಇಲ್ಲವೆ ಮೂಲೆ ಹಿಡಿದು ಕೂತಿರುತ್ತವೆ. ಅದೇನು ಹೈಕಮಾಂಡ್ ನಿರ್ದೇಶನ ಬಂದರೆ ತಗಾ, ಸಖತ್ ಸಂಘಟನೆಯಾಗಿ, ಚಕಚಕನೆ ಹುತ್ತ ಕಟ್ಟುವುದೇನು, ಆಹಾರಕ್ಕೆ ಧಾವಿಸುವುದೇನು, ರಾಜರಾಣಿಯರಿಗೆ ಪಟ್ಟ ಕಟ್ಟುವುದೇನು, ಮೊಟ್ಟೆ ಮರಿಗಳ ಪೋಷಣೆ ಮಾಡುವುದೇನು…)
ಮಿಡತೆಗಳು ದಾಳಿ ಮಾಡಿದಲ್ಲಿ ಬರಗಾಲ ಬರುತ್ತದೊ ಅಥವಾ ಬರಗಾಲ ಬರುವಂಥ ಸ್ಥಿತಿಗಾಗಿ ಅವು ಕಾದು ಕೂತಿರುತ್ತವೊ -ಅಂತೂ ಆಫ್ರಿಕ, ಮೊಂಗೋಲಿಯಾ, ಆಸ್ಟ್ರೇಲಿಯಾ ಮತ್ತು ಮಧ್ಯಪ್ರಾಚ್ಯಗಳ ಬರಗೆಟ್ಟ ಭೂಮಿಗಳ ಅಂಚಿನ ಹೊಲಗಳಿಗೆ ಮಿಡತೆದಾಳಿ ಆಗಾಗ ಆಗುತ್ತಿರುತ್ತದೆ. ಇರಾನ್, ಇರಾಕ್ ಅಫ್ಘಾನಿಸ್ತಾನ್, ಕಿರ್ಗಿಸ್ತಾನ, ಪಾಕಿಸ್ತಾನ ದಾಟಿ ಅವು ನಮ್ಮಲ್ಲೂ ರಾಜಸ್ತಾನ್, ಗುಜರಾತಿನ ಕಚ್ಛದ ಮರುಭೂಮಿಗಳಲ್ಲಿ ಚಿಕ್ಕಪುಟ್ಟ ತುಕಡಿ ಕಟ್ಟಿಕೊಂಡು ಪ್ರತಿವರ್ಷ ಅಲ್ಲಿಷ್ಟು ಇಲ್ಲಿಷ್ಟು ಹಾವಳಿ ಎಬ್ಬಿಸುತ್ತವೆ. ಎಲ್ಲೋ ಕೆಲವು ದಶಕಗಳಿಗೊಮ್ಮೆ ಅವು ಪ್ಲೇಗ್, ಸಿಡುಬು, ಕೊರೊನಾ ಥರಾ ವ್ಯಾಪಕ ದಾಳಿಗೆ ಹೊರಡುತ್ತವೆ.
ಆಫ್ರಿಕದಲ್ಲಿ ಇದರ ಹಾವಳಿ ತುಸು ಪದೇ ಪದೇ ಕಂಡು ಬರುತ್ತಿರುತ್ತದೆ. ನೈಜೀರಿಯಾದ ಸಾಹಿತಿ ಚಿನುವಾ ಅಚಿಬೆ ಬರೆದ “ಥಿಂಗ್ಸ್ ಫಾಲ್ ಅಪಾರ್ಟ್’ ಕಾದಂಬರಿಯಲ್ಲಿ ಇದರ ಪ್ರಸ್ತಾಪ ಬರುತ್ತದೆ. ಐರೋಪ್ಯ ಕ್ರಿಶ್ಚಿಯನ್ ಮಿಶನರಿಗಳು ಆಫ್ರಿಕದ ಹಳ್ಳಿಗಳನ್ನು ಹೇಗೆ ಆಕ್ರಮಿಸಿದರು ಎಂಬುದನ್ನು ವರ್ಣಿಸಲು ಆತ ಈ ಕೀಟಗಳ ರೂಪಕವನ್ನು ಬಳಸಿಕೊಳ್ಳುತ್ತಾನೆ. ಮಿಡತೆಗಳ ಸೈನ್ಯ ಬಂತೆಂದರೆ ಹಳ್ಳಿಯ ಪ್ರತಿ ಗಿಡ, ಪೊದೆ, ಹುಲ್ಲೆಸಳ ಮೇಲೂ ಅವು ಕೂರುತ್ತವೆ. ಅವನ್ನು ಹೇಗೆ ಎದುರಿಸಬೇಕು ಎಂಬುದು ಹಳ್ಳಿಯ ಮುಗ್ಧರಿಗೆ ಗೊತ್ತಾಗುವುದಿಲ್ಲ. ಎದುರಿಸಬೇಕೆ ಬೇಡವೆ ಎಂಬುದೂ ಅವರಿಗೆ ಸ್ಪಷ್ಟವಿರುವುದಿಲ್ಲ. ಏಕೆಂದರೆ ಅವು ಹಸಿವೆಗೆ ಕಾರಣವೂ ಹೌದು, ಹಸಿವೆಗೆ ಪರಿಹಾರವೂ ಹೌದು (ಏಕೆಂದರೆ ಅಲ್ಲಿಯ ಜನರು ಮಿಡತೆಗಳನ್ನು ಹುರಿದು ತಿನ್ನುತ್ತಾರೆ.).
ಬೈಬಲ್ಲಿನಲ್ಲಿ ಮಿಡತೆದಾಳಿಯ ಪ್ರಸ್ತಾಪ ಪದೇ ಪದೇ ಬರುತ್ತದೆ. ಒಮ್ಮೆಯಂತೂ ಈಚಿಪ್ತಿನ ದೊರೆಗಳು ಯಹೂದ್ಯರನ್ನು ಬಂಧನದಲ್ಲಿ ಇಟ್ಟಿದ್ದರೆಂಬ ಕಾರಣಕ್ಕೆ ದೇವನಿಗೆ ಕೋಪ ಬರುತ್ತದೆ. ಆತ ಮೋಸೆಸ್ ಎಂಬ ಅನುಯಾಯಿಯನ್ನು ಕರೆದು ಮಿಡತೆ ದಾಳಿಗೆ ಆದೇಶ ನೀಡುತ್ತಾನೆ. ಸರ್ವನಾಶ ಆಗಿ ಹೋಗಲಿ ಎಂದು. ಕುರಾನಿನಲ್ಲಿ ಎರಡೇ ಬಾರಿ ನಾವು ಮಿಡತೆಗಳ ಹೆಸರನ್ನು ನೋಡುತ್ತೇವೆ. ದುಷ್ಟ ಮನುಷ್ಯನೊಬ್ಬನ ಮೇಲೆ ಏನೆಲ್ಲ ಸಂಕಟಗಳ ಸುರಿಮಳೆ ಮಾಡಿದರೂ ಆತ ತನ್ನ ದುಷ್ಟಬುದ್ಧಿಯನ್ನು ಬಿಡುವುದಿಲ್ಲ ಎನ್ನುವಾಗ ಮಿಡತೆಗಳ ಸುರಿಮಳೆಯ ಪ್ರಸ್ತಾಪ ಬರುತ್ತದೆ.
ಸಂಸ್ಕೃತದಲ್ಲಿ ಮಿಡತೆಗೆ ‘ಶಲಭ’ ಅನ್ನುತ್ತಾರೆ. ಮೊಟ್ಟೆಗಳಿಂದ ಜನಿಸುವ ಜೀವಿಗಳನ್ನು ‘ಅಂಡಜ’ ಅನ್ನುವ ಹಾಗೆ, ತೇವ ಮತ್ತು ಉಷ್ಣ ಪರಿಸರದಿಂದ ಹೊಮ್ಮುವ ಸೊಳ್ಳೆ, ನೊಣ, ತಿಗಣೆ, ಮಿಡತೆಗಳನ್ನು ‘ಶ್ವೇದಜ’ ಎಂದು ನಮ್ಮ ಹಿಂದಿನವರು ವರ್ಗೀಕರಿಸಿದ್ದಾರೆ. ಅವುಗಳ ಕಾಟ ತಗ್ಗಿಸಲೆಂದು ಪ್ರಾರ್ಥನೆಯೂ ಅಥರ್ವಣವೇದದಲ್ಲಿದೆ (6.50.2). ‘ನಮ್ಮ ಆಹಾರಗಳನ್ನು ಧ್ವಂಸ ಮಾಡಲೆಂದು ಬರುವ ಎಲೈ ಮಿಡತೆ ಪತಂಗಗಳೇ, ದೂರ ಹೋಗಿ! ಅಶುದ್ಧ ನೈವೇದ್ಯವನ್ನು ದೇವರು ತಿರಸ್ಕರಿಸುವ ಹಾಗೆ ನೀವೂ ನಮ್ಮ ಆಹಾರವನ್ನು ತಿನ್ನದೆ, ಧ್ವಂಸ ಮಾಡದೇ ಹೊರಟು ಹೋಗಿ ಎಂಬ ಪ್ರಾರ್ಥನೆ ಅದರಲ್ಲಿದೆ.
ಶಲಭ ಎಂಬ ಪದವನ್ನು ನೆನಪಿನಲ್ಲಿ ಇಡುವುದು ಸುಲಭ. ಯೋಗಾಭ್ಯಾಸ ಮಾಡುವವರು ಶಲಭಾಸನ ಹಾಕಿದರೆ ತುಸುಮಟ್ಟಿಗೆ ಮಿಡತೆಯಂತೆಯೇ ಕಾಣುತ್ತಾರೆ. ಶಲಭಾಸನದಲ್ಲಿ ಹೊಟ್ಟೆಯ ಮೇಲೆ ಜಾಸ್ತಿ ಭಾರ ಬೀಳುತ್ತದೆ. ಮಿಡತೆ ದಾಳಿಯಲ್ಲೂ ಹೊಟ್ಟೆಗೇ ತಾಪತ್ರಯ ಆಗುತ್ತದೆ.
ಉದ್ದುದ್ದ ಹಿಂಗಾಲುಗಳ ಮಿಡತೆಗಳು ರೆಕ್ಕೆ ಬೀಸದೆಯೂ ಐದಾರು ಮೀಟರ್ ದೂರ ಚಿಮ್ಮುತ್ತವೆ. ಆಮೇಲೆ ರೆಕ್ಕೆ ಬೀಸುತ್ತ ಗಾಳಿ ಬೀಸಿದ ದಿಕ್ಕಿಗೆ ಅವು 20-30 ಕಿ.ಮೀ. ದೂರಕ್ಕೂ ಹಾರುತ್ತವೆ. ಆ ಪುಟ್ಟ ಕೀಟದ ಅಪಾರ ನೆಗೆತವನ್ನು ನೋಡಿ ಕನ್ನಡದ ಹಳ್ಳಿಯ ಜನರು ‘ಸೂರ್ಯನ ಕುದುರೆ’ ಎಂದು ಹೆಸರಿಟ್ಟು ಅದೆಂಥ ಸೃಜನಶೀಲತೆಯನ್ನು ಮೆರೆದಿದ್ದಾರೆ ಎಂದು ಹೇಳಿ ಡಾ. ಯು.ಆರ್. ಅನಂತಮೂರ್ತಿಯವರು ತಮ್ಮ ಕೃತಿಯೊಂದಕ್ಕೆ ಅದೇ ಹೆಸರನ್ನಿಟ್ಟಿದ್ದಾರೆ.
ಮುಂಗಾರಿನ ಈ ಸಮಯದಲ್ಲಿ ನಮ್ಮಲ್ಲಿ ಬಹುತೇಕ ಎಕ್ಕದ ಗಿಡಗಳ ಮೇಲೆ ಈ ಕುದುರೆಗಳು ಸಾಲಾಗಿ ಕೂತಿರುತ್ತವೆ. ಆದರೆ ನಾವು ದಕ್ಷಿಣ ಭಾರತದವರು ಸುರಕ್ಷಿತ. ಇಲ್ಲಿನ ಹಸುರು ಮಿಡತೆಗಳು ದಂಡು ಕಟ್ಟಿಕೊಂಡು ದಾಳಿಗೆ ಹೋಗುವುದಿಲ್ಲ. ಬರದೇಶಗಳ ದಂಡುಕೋರ ಮಿಡತೆಗಳೂ ಇತ್ತ ಬರುವುದಿಲ್ಲ.
ಅದು ಸರಿ, ಕಳೆದ 26 ವರ್ಷಗಳಲ್ಲಿ ಕಾಣದ ಮಿಡತೆ ಪ್ಲೇಗ್ ಈ ವರ್ಷ ಯಾಕೆ ಇಷ್ಟು ಉಗ್ರ?
ಏಕೆಂದರೆ ಕಳೆದ ಎರಡು ವರ್ಷಗಳಲ್ಲಿ ಅರಬ್ ಪ್ರಾಂತ್ಯಗಳಲ್ಲಿ ಕೆಲವೆಡೆ ಭಾರೀ ಚಂಡಮಾರುತ ಬೀಸಿ, ಮರುಭೂಮಿಯಲ್ಲಿ ಅಲ್ಲಲ್ಲಲ್ಲಿ ಓಯಸಿಸ್ ರೂಪದ ಕೆರೆಗಳು ಉಂಟಾಗಿದ್ದವು. ಅಲ್ಲಿ ನಾಲ್ಕಾರು ತಿಂಗಳು ತೇವಾಂಶ ಜಾಸ್ತಿ ಇತ್ತು. ಅಲ್ಲೆಲ್ಲ ಹುಟ್ಟಿಕೊಂಡ ಮಿಡತೆಗಳು ಚಂಡಮಾರುತದಂತೆ ಬೀಸಿ ಬರುತ್ತಿವೆ.
ಗಡಿ ದಾಟುತ್ತ ದಾಟುತ್ತ ಪಾಕಿಸ್ತಾನ ದಾಟಿ ರಾಜಸ್ತಾನ, ಗುಜರಾತ, ಮಧ್ಯಪ್ರದೇಶಗಳಲ್ಲಿ ಹಾವಳಿ ಎಬ್ಬಿಸಿವೆ. ಪಾಕಿಸ್ತಾನದಲ್ಲಿ ಮೂರು ತಿಂಗಳು ಹಿಂದೆ ರೈತರು ಭಾರೀ ನಷ್ಟ ಅನುಭವಿಸಿದ್ದರು. ನಮ್ಮ ರೈತರಿಗೆ ಹಾನಿ ಅಷ್ಟಾಗಿಲ್ಲ ಏಕೆಂದರೆ ಅವು ದಂಡೆತ್ತಿ ಬರುವಷ್ಟರಲ್ಲಿ ಇಲ್ಲಿ ಕಟಾವು ಮುಗಿದಿತ್ತು.
ಹಳ್ಳಿಗಳನ್ನು ಬಿಟ್ಟು ಅವು ಈಗ ನಗರಗಳಿಗೇ ದಾಳಿ ಇಡುತ್ತಿವೆ. ಏನು ಕಾರಣ? ಸೀರಿಯಸ್ ಜೋಕ್ ಏನೆಂದರೆ- ಅವು ಉತ್ತರ ಭಾರತದ ಹಳ್ಳಿಗಳ ದಾರಿದ್ರ್ಯದ ಕತೆಯನ್ನು ವರದಿ ಮಾಡಲೆಂದು ಅವು ನಗರಗಳಿಗೆ ಬರುತ್ತಿವೆ. ಅಲ್ಲಿನ ಹಳ್ಳಿಗಳಲ್ಲಿ ಎಲ್ಲೆಲ್ಲೂ ಹೊಲಗಳೇ ಹೊರತೂ ನೈಸರ್ಗಿಕ ಗಿಡಮರಗಳ ಸಾಂದ್ರತೆ ತೀರ ಕಡಿಮೆ. ಅರಣ್ಯಗಳಂತೂ ಇಲ್ಲವೇ ಇಲ್ಲ. ಪೈರು ಕಟಾವಾದ ಮೇಲೆ ನೀವು ಅಷ್ಟಿಷ್ಟು ಹಸುರನ್ನು ನೋಡಬೇಕೆಂದರೆ ನಗರದ ಉದ್ಯಾನಗಳಿಗೇ ಬರಬೇಕು. ಅವು ಬರುತ್ತಿವೆ.
ಈಗಾಗಲೇ ಜಯಪುರ, ಝಾಂಸಿಯಂಥ ನಗರಗಳು ಕಂಗಾಲಾಗಿವೆ. ತಮಾಷೆ ಏನೆಂದರೆ ಕೊರೊನಾ ಮಾದರಿಯ ಸರಕಾರಿ ನಿಯಂತ್ರಣ ಕ್ರಮಗಳೇ ಅಲ್ಲೂ ಜಾರಿಗೆ ಬಂದಿವೆ! ಶಂಖ- ಜಾಗಟೆ ಬಾರಿಸಿ ಡಾಂ ಡೂಮ್ ಮಾಡುತ್ತಿದ್ದಾರೆ. ಕೀಟನಾಶಕ ದ್ರವಗಳನ್ನು ತುಂಬಿಕೊಂಡ ಸಾವಿರಾರು ಟ್ಯಾಂಕರ್ಗಳು ಜಾಥಾ ಹೊರಟಿವೆ. (ವಲಸೆ ಕಾರ್ಮಿಕರನ್ನು ಸಾಲಾಗಿ ನಿಲ್ಲಿಸಿ ಅವರ ಮೈಗೆ ಬ್ಲೀಚಿಂಗ್ ದ್ರಾವಣವನ್ನು ಎರಚಿದ ಹಾಗೆ) ಮಿಡತೆಗಳು ಆಶ್ರಯಿಸಿದ ಮರಗಳ ಮೇಲೆ ಭರ್ಜರಿ ಸಿಂಚನ ಮಾಡಲಾಗುತ್ತಿದೆ. ಈಗಂತೂ ಡ್ರೋನ್ಗಳ ಮೂಲಕವೂ ಸಿಂಚನ ಮಾಡಲು ಸಿದ್ಧತೆ ನಡೆದಿದೆ.
ವಲಸೆ ಕಾರ್ಮಿಕರು ಪಾಪ, ಈ ಮಿಡತೆಗಳಂತೆ ಹಳ್ಳಿಗಳನ್ನು ಬಿಟ್ಟು ಹೊಸ ಕನಸನ್ನು ಹುಡುಕುತ್ತ ನಗರಗಳಿಗೆ ಬಂದಿದ್ದಾರೆ, ಅವರ ಅವಸ್ಥೆ ನೋಡಿ. ಇಲ್ಲಿರಲಾರೆ, ಅಲ್ಲಿಗೆ ಹೋಗಲಾರೆ ಎಂಬಂಥ ಪರಿಸ್ಥಿತಿ ಮಿಡತೆಗಳಿಗೂ ಬಂದಿದೆ. ಅಂತೂ ಸ್ಯಾನಿಟೈಸರ್ ಮತ್ತು ಕೀಟನಾಶಕ ವಿಷಗಳ ಉತ್ಪಾದನೆ ಮಾಡುವ ಕಂಪನಿಗಳಿಗೆ ಕೊರೊನಾ ಕಾಲದಲ್ಲೂ ಹಬ್ಬ, ಮಿಡತೆಕಾಲದಲ್ಲೂ ಹಬ್ಬ.
‘ಬರ ಎಂದರೆ ಎಲ್ಲರಿಗೂ ಇಷ್ಟ’ ಎಂಬ ಸಾಯಿನಾಥ್ ಗ್ರಂಥದ ಹೆಸರು ನೆನಪಿಗೆ ಬಂತೆ?
ಆಫ್ರಿಕದಲ್ಲಿ ಮಿಡತೆಗಳು ಹಸಿವೆಗೆ ಕಾರಣವೂ ಹೌದು, ಪರಿಹಾರವೂ ಹೌದು ಎಂದೆನಲ್ಲ? ಭಾರತದಲ್ಲೂ ಪರಿಸ್ಥಿತಿ ತುಸು ಅದೇನೇ ಇದೆ. ವ್ಯತ್ಯಾಸ ಏನೆಂದರೆ, ಹಳ್ಳಿಗಳಲ್ಲಿ ಹಸಿವೆ ಸಂಕಷ್ಟ ಹೆಚ್ಚುತ್ತದೆ. ನಗರಗಳಲ್ಲಿನ ದಲ್ಲಾಳಿಗಳ ಹಸಿವೆಗೆ ಪರಿಹಾರ ಸಿಗುತ್ತದೆ.
ಮಿಡತೆಗೂ ಕೊರೊನಾಕ್ಕೂ ಇರುವ ಕೊನೆಯ ಇನ್ನೊಂದು ಸಾಮ್ಯವನ್ನು ಇಲ್ಲಿ ಹೇಳಿಬಿಡಬೇಕು: ನೆರೆಯ ದೇಶಗಳಲ್ಲಿ ಅದು ಹಾವಳಿ ಎಬ್ಬಿಸುತ್ತಿದೆ ಎಂದು ನಾಲ್ಕು ತಿಂಗಳು ಮೊದಲೇ ಸೂಚನೆ ಸಿಕ್ಕಿತ್ತು. ಟಾಂ ಟಾಂ ಆಗಿತ್ತು. ಆಗಲೇ ಗಡಿಯನ್ನು ಭದ್ರ ಮಾಡುವಂತೆ ಸರಹದ್ದಿನಲ್ಲಿ ಸೂಕ್ತ ಕ್ರಮ ಕೈಗೊಂಡಿದ್ದಿದ್ದರೆ ಮಿಡತೆ ಹಾವಳಿ ಇಷ್ಟು ವ್ಯಾಪಕ ಆಗುತ್ತಿರಲಿಲ್ಲ.
ಮಿಡತೆ ದಾಳಿಯಿಂದ ಜರ್ಝರಿತಗೊಂಡ ಜೀವಲೋಕ ಈಗ ಇವರು ಎರಚುವ ವಿಷಧಾರೆಗೆ ತತ್ತರಿಸುತ್ತಿದೆ. ನಮ್ಮಲ್ಲಿರುವ ವಿಷಗಳು ಸಾಲದೆಂದು ಅವಸರದಲ್ಲಿ ಇಂಗ್ಲಂಡಿನಿಂದ ಘೋರ ವಿಷಗಳನ್ನು ತರಿಸುತ್ತಿದ್ದಾರಂತೆ. ಅವುಗಳ ಸಿಂಚನದಿಂದಾಗಿ ಜೇಡ, ಜೇನ್ನೊಣ, ಎರೆಹುಳ, ಇರುವೆ, ಕಪ್ಪೆ, ಚಿಟ್ಟೆ, ಓತಿಕ್ಯಾತ, ಗುಬ್ಬಚ್ಚಿ, ಗೀಜಗ, ಸೂರಕ್ಕಿ ಹೀಗೆ ಎಲ್ಲ ನೆಲಮೂಲದ ಜೀವಲೋಕದ ಮಾರಣ ಹೋಮ ಆಗುತ್ತಿದೆ.
(ಇಂಗ್ಲಂಡಿನ ಬದುಕಿನ ಅನುಕರಣೆಯ ಬಗ್ಗೆ ಗಾಂಧೀಜಿ ಏನು ಹೇಳಿದ್ದರೆಂಬುದೂ ನಮಗಿಲ್ಲಿ ನೆನಪಾಗಬೇಕು. ಅವರು ಅದನ್ನು ಹೇಳುವಾಗ ಇಡೀ ದೇಶದ ಜನಸಂಖ್ಯೆ 30 ಕೋಟಿ ಇತ್ತು. ಇಂದು ಸುಮಾರು 30 ಕೋಟಿ ಜನರಿಗೆ ಐಷಾರಾಮಿ ಜೀವನ ಕೈಗೆಟುಕಿದೆ. ಮಿಡತೆ ದಾಳಿಯ ಪರಿಣಾಮ ಇತರ ನೂರು ಕೋಟಿ ಜನರ ಮೇಲೆ ಕಾಣತೊಡಗಿದೆ.)
ಮೊನ್ನೆ ಮೇ 22ರಂದು ಜೀವಿವೈವಿಧ್ಯ ರಕ್ಷಣೆಯ ದಿನವಾಗಿತ್ತು; ಬರಲಿರುವ ಜೂನ್ 5ರ ವಿಶ್ವಪರಿಸರ ದಿನಕ್ಕೂ ಜೀವಿವೈವಿಧ್ಯ ರಕ್ಷಣೆಯೇ ಘೋಷವಾಕ್ಯವಾಗಿದೆ. ಕೋವಿಡ್ ಅನ್ನಿ, ಆಂಫನ್ ಅನ್ನಿ, ಮಿಡತೆ ಅನ್ನಿ, ಇಡೀ ದೇಶವೇ ವಿಷಸಿಂಚನದ ಭರಾಟೆಯಲ್ಲಿದೆ.
ಚಿಂತಿಸಬೇಕಿಲ್ಲ. ಜೂನ್ 5ರ ಸರಕಾರಿ ಜಾಹೀರಾತುಗಳಲ್ಲಿ ಜೀವಿವೈವಿಧ್ಯ ರಕ್ಷಣೆಯ ಘೋಷಣೆ ಅದ್ಧೂರಿಯಾಗಿ ನಡೆಯಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
‘ಮತದಾರ ದೇವರು’ ಎಂದ ಸಿದ್ದರಾಮಯ್ಯ
ಸುದ್ದಿದಿನಡೆಸ್ಕ್:ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಲ್ಲಿಸಿರುವ ರಾಜೀನಾಮೆ ಪತ್ರವನ್ನು ಘನತೆವೆತ್ತ ರಾಜ್ಯಪಾಲರಿಗೆ ನೀಡಿ ಬಂದಿದ್ದೇನೆ. ಸಾಂವಿಧಾನಿಕ ವಿಧಿ-ವಿಧಾನಗಳ ಮೂಲಕ ರಾಜ್ಯಪಾಲರು ಕ್ರಮಕೈಗೊಳ್ಳುತ್ತಾರೆ. ಶೀಘ್ರದಲ್ಲಿಯೇ ನೂತನ ಮುಖ್ಯಮಂತ್ರಿಯನ್ನು ರಾಜ್ಯದ ಜನತೆ ಕಾಣಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ, ಇಂದಿನ ವರೆಗೂ ನನಗೆ ನಿರೀಕ್ಷೆಗೂ ಮೀರಿ ಪ್ರೀತಿ ನೀಡಿದ, ಅಭಿಮಾನಿಸಿದ, ಕೈಹಿಡಿದು ನಡೆಸಿದ ರಾಜ್ಯದ ಜನತೆಯನ್ನು ಉದ್ದೇಶಿಸಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಮೇರು ನಟ ಡಾ.ರಾಜ್ಕುಮಾರ್ ಅವರು ಅಭಿಮಾನಿಗಳನ್ನು ‘’ಅಭಿಮಾನಿ ದೇವರು’’ ಎಂದು ಕರೆಯುತ್ತಿದ್ದರು, ನಾನೊಬ್ಬ ಸಂವಿಧಾನವನ್ನೇ ಧರ್ಮ ಎಂದು ತಿಳಿದುಕೊಂಡಿರುವ ರಾಜಕಾರಣಿ. ನನ್ನ ಪಾಲಿಗೆ ಮತದಾರರು ‘’ಮತದಾರ ದೇವರು”. ಆ ದೇವರುಗಳ ಮುಂದೆ ನನ್ನ ಮನದಾಳದ ಕೆಲವು ಮಾತುಗಳನ್ನು ಹಂಚಿಕೊಳ್ಳಬೇಕೆಂದು ಬಯಸಿದ್ದೇನೆ ಎಂದರು.
ದಶಕಗಳ ಕಾಲ ಸಾರ್ವಜನಿಕ ಜೀವನದಲ್ಲಿರುವ ನನ್ನ ಬಗ್ಗೆ ರಾಜ್ಯದ ಜನತೆಗೆ ತಿಳಿದಿದೆ. ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಜಾಯಮಾನದವನಲ್ಲ. ಈ ರಾಜೀನಾಮೆ ಪತ್ರವನ್ನು ಕೂಡಾ ಅತ್ಯಂತ ಸಂತೋಷದಿಂದ ಮನಪೂರ್ವಕವಾಗಿ ನೀಡಿದ್ದೇನೆ.
ಹಳ್ಳಿಗಾಡಿನ ರೈತಾಪಿ ಕುಟುಂಬದಿಂದ ಬಂದ ನಾನು ರಾಜಕಾರಣಕ್ಕೆ ಪ್ರವೇಶ ಮಾಡುವಾಗ ಮುಂದೊಂದು ದಿನ ಶಾಸಕನಾಗುತ್ತೇನೆ, ಸಚಿವನಾಗುತ್ತೇನೆ, ನಾಡಿನ ಮುಖ್ಯಮಂತ್ರಿಯಾಗುತ್ತೇನೆ ಎಂದು ಕನಸನ್ನೂ ಕಂಡವನಲ್ಲ. ಇಂತಹದ್ದೊಂದು ದುಬಾರಿ ಕನಸನ್ನು ನನಸು ಮಾಡಿದ್ದು ಬಾಬಾಸಾಹೇಬ್ ಅಂಬೇಡ್ಕರ್ ಅವರು ಬರೆದಿರುವ ಸಂವಿಧಾನ. ಈ ಸಂವಿಧಾನದ ಬಲ ಇಲ್ಲದೆ ಹೋಗಿದ್ದರೆ ನಾನು ಎಲ್ಲೋ ಕುರಿ ಮೇಯಿಸಿಕೊಂಡೋ, ಇನ್ನೇನೋ ಆಗಿ ಇರುತ್ತಿದ್ದೆ. ಈ ಕಾರಣಕ್ಕಾಗಿ ಮೊದಲಿಗೆ ನಮ್ಮ ಸಂವಿಧಾನ ಮತ್ತು ಸಂವಿಧಾನದ ಶಿಲ್ಪಿಯಾದ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಈ ಸಂದರ್ಭದಲ್ಲಿ ತಲೆಬಾಗಿ ನಮಿಸುತ್ತೇನೆ.
ಎರಡನೆಯದಾಗಿ ರಾಜ್ಯದ ಜನತೆ. ಹೆಚ್ಚುಕಡಿಮೆ ನಾಲ್ಕುವರೆ ದಶಕಗಳ ಸುದೀರ್ಘ ರಾಜಕಾರಣದ ಪಯಣದಲ್ಲಿ ಜನ ನನ್ನನ್ನು ಶಾಸಕ, ಸಚಿವ, ಕೊನೆಗೆ ಎರಡುಬಾರಿ ಮುಖ್ಯಮಂತ್ರಿ ಸ್ಥಾನದ ಕಿರೀಟವನ್ನು ನನ್ನ ತಲೆ ಮೇಲೆ ಇಟ್ಟು ಹರಸಿ ಅವರ ಸೇವೆ ಮಾಡುವ ಭಾಗ್ಯವನ್ನು ನನಗೆ ಕರುಣಿಸಿದ್ದಾರೆ. ಆ ಮತದಾರ ದೇವರುಗಳಿಗೆ ನಾನು ಆಭಾರಿಯಾಗಿದ್ದೇನೆ.
ಮೂರನೆಯದಾಗಿ, ನನ್ನ ಸೈದ್ಧಾಂತಿಕ ಬದ್ಧತೆ ಮತ್ತು ರಾಜಕೀಯ ಹೋರಾಟಕ್ಕೆ ಮನ್ನಣೆ ನೀಡಿದ ಕಾಂಗ್ರೆಸ್ ಪಕ್ಷವು ನನ್ನ ಮೇಲೆ ವಿಶ್ವಾಸ ಇರಿಸಿ ನನ್ನನ್ನು ಬರಮಾಡಿಕೊಂಡು ರಾಜಕೀಯ ಕ್ಷೇತ್ರದಲ್ಲಿ ಅವಕಾಶ ನೀಡಿದೆ. ಎರಡು ಬಾರಿ ಮುಖ್ಯಮಂತ್ರಿ ಮಾಡಿದೆ, ವಿರೋಧ ಪಕ್ಷದ ನಾಯಕನಾಗಿ ಕೆಲಸ ಮಾಡಲು ಅವಕಾಶ ನೀಡಿದೆ. ಆ ಮೂಲಕ ಈ ನಾಡಿನ ಜನತೆಗೆ ನಾನು ನಂಬಿರುವ ತತ್ವಾದರ್ಶಗಳ ಅನುಸಾರ ಸೇವೆ ಸಲ್ಲಿಸಲು ಅವಕಾಶ ನೀಡಿದೆ. ಈ ಕಾರಣಕ್ಕಾಗಿ ಶ್ರೀಮತಿ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿಯವರಿಗೆ ಸದಾ ಆಭಾರಿಯಾಗಿರುತ್ತೇನೆ.
ನಾನೆಂದೂ ರಾಜಕಾರಣವನ್ನು ಅಧಿಕಾರದ ದಂಡ ಎಂದಾಗಲಿ, ವ್ಯಾಪಾರದ ಗಲ್ಲಾ ಪೆಟ್ಟಿಗೆ ಎಂದಾಗಲಿ ತಿಳಿದುಕೊಂಡವನಲ್ಲ, ಅದು ಬಡವರಿಗೆ, ಶೋಷಿತರಿಗೆ, ನೊಂದವರಿಗೆ ನೆರವಾಗುವ ಒಂದು ಅವಕಾಶ ಎಂದು ತಿಳಿದುಕೊಂಡವನು. ಈ ಸಮುದಾಯಗಳಿಗೆ ನೆರವಾಗುವ ಉದ್ದೇಶದಿಂದಲೇ ವಕೀಲನಾಗಿ ಸೇವೆ ಮಾಡುತ್ತಿದ್ದ ನಾನು ರಾಜಕಾರಣವನ್ನು ಪ್ರವೇಶ ಮಾಡಿದವನು.
ನನ್ನ 77 ವರ್ಷಗಳ ಜೀವನ ಪಯಣದಲ್ಲಿ ಹಲವಾರು ವ್ಯಕ್ತಿಗಳು ಪ್ರೀತಿ-ವಿಶ್ವಾಸದಿಂದ ಕೈಹಿಡಿದು ಮುನ್ನಡೆಸಿದ್ದಾರೆ. ನನ್ನ ಬದುಕು ಒಂದು ತೆರೆದ ಪುಸ್ತಕ. ಈ ಪುಸ್ತಕದಲ್ಲಿ ಮೊದಲ ಬರವಣಿಗೆ ಮಾಡಿದ್ದು ವೀರ ಕುಣಿತವನ್ನು ಕಲಿಯುತ್ತಾ ಸಮಯ ಸಿಕ್ಕಾಗ ಮರಳಿನ ಮೇಲೆ ಅಕ್ಷರಾಭ್ಯಾಸ ಮಾಡುತ್ತಿದ್ದ ನನ್ನನ್ನು ಶಾಲೆಗೆ ಕರೆದೊಯ್ದು ವಿದ್ಯೆ ಕಲಿಯುವ ಅವಕಾಶ ನೀಡಿದವರು ರಾಜಪ್ಪ ಮಾಸ್ತರ್.
ವಕೀಲನಾಗಿದ್ದ ನನ್ನಲ್ಲಿನ ಸೇವಾಕಾಂಕ್ಷೆಯನ್ನು ಗುರುತಿಸಿ ಸಮಾಜವಾದದ ಪಾಠ ಮಾಡಿ, ರಾಜಕಾರಣಿಗಳಿಗೆ ಇರಬೇಕಾದ ಸೈದ್ಧಾಂತಿಕ ಬದ್ಧತೆ, ಜನಪರ ಕಾಳಜಿ ಮತ್ತು ಹೋರಾಟದ ಗುಣವನ್ನು ಕಲಿಸಿದವರು ರೈತನಾಯಕ ಎಂ.ಡಿ.ನಂಜುಂಡಸ್ವಾಮಿ
ಮೊದಲ ಬಾರಿ 1983ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದ ನನ್ನನ್ನು ಗುರುತಿಸಿ ಕನ್ನಡ ಕಾವಲು ಸಮಿತಿ ಅಧ್ಯಕ್ಷನನ್ನಾಗಿ ಮಾಡಿದ್ದಲ್ಲದೆ ಎರಡನೇ ಬಾರಿ ಶಾಸಕನಾದ ನನ್ನನ್ನು ಸಚಿವನನ್ನಾಗಿ ಮಾಡಿದವರು ದಿವಂಗತ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ.
ಇವರೆಲ್ಲರ ನೆರವು, ಕಾಳಜಿ ಮತ್ತು ಮಾರ್ಗದರ್ಶನಗಳು ಇಲ್ಲದೆ ಹೋಗಿದ್ದರೆ ನಾನು ಇಷ್ಟು ದೂರ ಸಾಗಿ ಬರುತ್ತಿರಲಿಲ್ಲ ಮತ್ತು ಇಷ್ಟು ಎತ್ತರಕ್ಕೆ ಏರಲು ಕೂಡಾ ಆಗುತ್ತಿರಲಿಲ್ಲ ಎನ್ನುವುದನ್ನು ವಿನಮ್ರವಾಗಿ ನಿವೇದಿಸಬಯಸುತ್ತೇನೆ.
ನಾನು ದುಡ್ಡು, ಆಸ್ತಿಪಾಸ್ತಿ ಮಾಡಲು ರಾಜಕಾರಣಿ ಆದವನಲ್ಲ. ಮತದಾರ ದೇವರುಗಳು ಅಧಿಕಾರದ ಮೂಲಕ ಅವಕಾಶ ನೀಡಿದಾಗೆಲ್ಲ ಅವರ ಕಲ್ಯಾಣಕ್ಕಾಗಿ ಶ್ರಮಿಸಿದ್ದೇನೆ. ಈ ಸಂದರ್ಭದಲ್ಲಿ ನನ್ನ ಸಾಧನೆಗಳ ದಾಖಲೆಗಳನ್ನು ನಾನು ನಿಮ್ಮ ಮುಂದೆ ಇಟ್ಟ ನನ್ನನ್ನು ಸಾಬೀತುಪಡಿಸುವ ವ್ಯರ್ಥಪ್ರಯತ್ನವನ್ನು ನಾನು ಮಾಡುವುದಿಲ್ಲ. ಅವೆಲ್ಲವೂ ತೆರೆದ ಪುಸ್ತಕದ ರೀತಿಯಲ್ಲಿ ರಾಜ್ಯದ ಜನತೆಯ ಕಣ್ಣಮುಂದಿದೆ.
ಜಾತಿ, ದುಡ್ಡು ಮತ್ತು ತೋಳ್ಬಲಗಳ ನೆರವಿಲ್ಲದೆ ರಾಜಕೀಯ ಕ್ಷೇತ್ರದಲ್ಲಿ ಹೆಜ್ಜೆ ಇಡಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು ಜನಜನಿತವಾಗಿದೆ. ಇದು ಈ ಕಾಲದ ಸತ್ಯವೂ ಹೌದು. ಇಂತಹ ಪರಿಸ್ಥಿತಿಯಲ್ಲಿ ಸಾಮಾಜಿಕ ನ್ಯಾಯ, ಜಾತ್ಯತೀತತೆ, ಭಾತೃತ್ವದಂತಹ ಸಂವಿಧಾನದ ಆಶಯಗಳಿಗೆ ಬದ್ದರಾಗಿ ರಾಜಕಾರಣ ಮಾಡುವುದು ಎಷ್ಟೊಂದು ಕಷ್ಟದ ಕೆಲಸ ಎನ್ನುವ ಅನುಭವ ನಾಲ್ಕುವರೆ ದಶಕಗಳ ರಾಜಕೀಯ ಪಯಣದಲ್ಲಿ ನನಗಾಗಿದೆ.
ನನ್ನ ರಾಜಕೀಯ ವಿರೋಧಿಗಳು ರಾಜಕಾರಣಕ್ಕಿಂತ ಬಹುದೂರ ಇದ್ದುಕೊಂಡು ಕುಟುಂಬದ ಪಾಲನೆ-ಪೋಷಣೆಗಷ್ಟೇ ತನ್ನನ್ನು ಸೀಮಿತಗೊಳಿಸಿಕೊಂಡ ನನ್ನ ಪತ್ನಿಯ ವಿರುದ್ದವೂ ಸುಳ್ಳು ಆರೋಪಗಳನ್ನು ಮಾಡಿ ಮಾನಸಿಕ ಹಿಂಸೆ ನೀಡಿದ್ದರು. ಆದರೆ ಶತ್ರುಗಳ ದಾಳಿಗೆ ಹೆದರಿ ಪಲಾಯನವಾದಿಯಾಗ ಬೇಡ, ಜನಸೇವೆಯ ಪಥದಿಂದ ಹಿಂದಡಿ ಇಡಬೇಡ ಎಂದು ನನ್ನ ಅಂತಾರಾತ್ಮ ಎಚ್ಚರಿಸಿತು. ಅನ್ಯಾಯದ ವಿರುದ್ಧ ನ್ಯಾಯದ ಹೋರಾಟವನ್ನು ಮುಂದುವರಿಸಿ ಆರೋಪಿತ ಕಳಂಕವನ್ನು ನಿವಾರಿಸಿಕೊಂಡು ನಿರಾಳನಾದೆ.
ಈ ಸಂಘರ್ಷದ ಹಾದಿಯಲ್ಲಿ ನಾನೆಂದೂ ನಂಬಿದ ಮೌಲ್ಯಗಳ ಜೊತೆ ರಾಜಿಮಾಡಿಕೊಂಡಿಲ್ಲ. ನಂಬಿದ ಜನತೆಗೆ ದ್ರೋಹ ಬಗೆದಿಲ್ಲ, ನನ್ನ ಆತ್ಮಸಾಕ್ಷಿಗೆ ವಂಚನೆ ಮಾಡಿಕೊಂಡಿಲ್ಲ. ಹೋರಾಟವನ್ನೇ ಬದುಕಾಗಿಸಿ ಸ್ವೀಕರಿಸಿ ಇಷ್ಟು ದೂರ ಬಂದಿದ್ದೇನೆ.
ಇಂದಿನ ವರ್ತಮಾನ ನನ್ನನ್ನು ಎಷ್ಟು ಅರ್ಥಮಾಡಿಕೊಂಡಿದೆಯೋ ಗೊತ್ತಿಲ್ಲ, ಸಾಮಾನ್ಯವಾಗಿ ಸಾಮಾಜಿಕ ಪರಿವರ್ತನೆಯ ಹರಿಕಾರರನ್ನು ವರ್ತಮಾನ ಕ್ರೂರವಾಗಿ ನಡೆಸಿಕೊಳ್ಳುತ್ತದೆ. ಆದರೆ ಇತಿಹಾಸ ಮಾತ್ರ ಅವರನ್ನು ನೆನಪಲ್ಲಿಟ್ಟುಕೊಂಡು ಸ್ಮರಿಸುತ್ತದೆ. ಹನ್ನೆರಡನೇ ಶತಮಾನದ ಬಸವಣ್ಣನವರಿಂದ ಹಿಡಿದು ಬಾಬಾ ಸಾಹೇಬ್ ಅಂಬೇಡ್ಕರ್ ವರೆಗೆ ಎಲ್ಲರ ಪಾಲಿನ ಸತ್ಯ ಇದು. ಈ ಭರವಸೆಯ ಆಸರೆಯೊಂದಿಗೆ ನನ್ನ ರಾಜಕೀಯ ಹೋರಾಟವನ್ನು ಮುಂದುವರಿಸಿಕೊಂಡು ಬಂದಿದ್ದೇನೆ, ಅಧಿಕಾರ ಇರಲಿ, ಇಲ್ಲದೆ ಇರಲಿ ಈ ಹೋರಾಟ ಮುಂದುವರಿಯಲಿದೆ.
ನಾನು ರಾಜಕಾರಣಕ್ಕೆ ಪ್ರವೇಶ ಮಾಡಿದಾಗ ನುಡಿದಂತೆ ನಡೆಯಬೇಕು, ಜನತೆ ಇಟ್ಟಿರುವ ವಿಶ್ವಾಸಕ್ಕೆ ಭಂಗ ಉಂಟು ಮಾಡಬಾರದೆಂಬ ಪ್ರಮಾಣವನ್ನು ಮನಸ್ಸಿನೊಳಗೆ ಮಾಡಿದ್ದೆ. ಜನರಿಗೆ ನೀಡಿದ ವಚನಪಾಲನೆಯೇ ನಿಜವಾದ ರಾಜಧರ್ಮ ಎಂದು ನಂಬಿದವನು ನಾನು. ಅದನ್ನು ತ್ರಿಕರಣಪೂರ್ವಕವಾಗಿ ಪಾಲಿಸಿದ್ದೇನೆ ಎಂಬ ವಿಶ್ವಾಸ ನನಗಿದೆ. ನುಡಿದಂತೆಯೇ ನಡೆದಿರುವುದಕ್ಕೆ ಇತಿಹಾಸ ಸಾಕ್ಷಿಯಾಗಿದೆ.
ರಾಜ್ಯದ ಕಟ್ಟಕಡೆಯ ಮನುಷ್ಯನಿಗೂ ಬದುಕಿನ ಪ್ರಾಥಮಿಕ ಅವಶ್ಯಕತೆಗಳಾದ ಅನ್ನ, ಆರೋಗ್ಯ, ಶಿಕ್ಷಣ, ವಸತಿ ಮತ್ತು ಉದ್ಯೋಗದ ಭಾಗ್ಯ ಲಭಿಸಬೇಕು. ಬಡವ-ಬಲ್ಲಿದನೆಂಬ ಭೇದ ಇಲ್ಲದೆ ಎಲ್ಲರೂ ನಿರ್ಭಯವಾಗಿ ಘನತೆ ಮತ್ತು ಗೌರವರಿಂದ ಬದುಕುವ ವಾತಾವರಣವನ್ನು ನಿರ್ಮಾಣ ಮಾಡಬೇಕು. ಕೃಷಿ ಸಂಪತ್ತು ಬೆಳೆಯಬೇಕು. ಉದ್ಯಮ ಕ್ಷೇತ್ರದಲ್ಲಿ ಪ್ರಗತಿಯಾಗಬೇಕು. ದುಡಿಯುವ ಕೈಗಳಿಗೆ ಉದ್ಯೋಗ ಸಿಗಬೇಕು. ಮೂಲಸೌಲಭ್ಯಗಳು ವೃದ್ಧಿಯಾಗಬೇಕು. ನೆಮ್ಮದಿಯಿಂದ ಬದುಕುವಷ್ಟು ಆದಾಯ ಪ್ರತಿ ಕುಟುಂಬದ ಪಾಲಿಗಿರಬೇಕು. ಸಂಪತ್ತು, ಅಧಿಕಾರ ಮತ್ತು ಅವಕಾಶ ಸಮಾನವಾಗಿ ಎಲ್ಲರಿಗೂ ಹಂಚಿಕೆಯಾಗಬೇಕು- ಇದು ರಾಜಕೀಯ ಕ್ಷೇತ್ರಕ್ಕೆ ಕಾಲಿಡುವಾಗ ನಾನು ಕಂಡ ಕನಸು.
ಆ ಕನಸು ನನಸಾಗುವ ದಾರಿಯಲ್ಲಿ ಕರ್ನಾಟಕ ಭರದಿಂದ ಮುನ್ನಡೆದಿದೆ. ಇಂದು ಕರ್ನಾಟಕವು ದೇಶದಲ್ಲಿಯೇ ತಲಾದಾಯದಲ್ಲಿ ಮೊದಲನೆಯ ಸ್ಥಾನದಲ್ಲಿದೆ. ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ನಾವು ಮೇಲಕ್ಕೇರುತ್ತಿದ್ದೇವೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ಜನತೆಗೆ ಸಾಮಾಜಿಕ ಭದ್ರತೆಯನ್ನು ಒದಗಿಸಿದ್ದೇವೆ. ಹಸಿವುಮುಕ್ತ ಕರ್ನಾಟಕ ನಿರ್ಮಾಣಗೊಳ್ಳುತ್ತಿದೆ, ಅಪೌಷ್ಠಿಕತೆಯಿಂದ ನರಳುತ್ತಿರುವ ಮಕ್ಕಳ ಸಂಖ್ಯೆ ಗಣನೀಯವಾಗಿ ಇಳಿದಿದೆ, ಆರೋಗ್ಯ ಸೇವೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುತ್ತಿದೆ. ಅತಿವೃಷ್ಟಿ-ಅನಾವೃಷ್ಟಿಗಳು ಎದುರಾದರೂ ಸಮರ್ಥವಾಗಿ ಎದುರಿಸಿದ್ದೇವೆ, ನೀರಾವರಿ ಯೋಜನೆಗಳ ತ್ವರಿತ ಅನುಷ್ಠಾನ ಮತ್ತು ಬೆಳೆದ ಬೆಳೆಗೆ ವೈಜ್ಞಾನಿಕವಾದ ಬೆಲೆ ನಿಗದಿಯಿಂದಾಗಿ ಸರ್ಕಾರದ ಬಗ್ಗೆ ರೈತರಲ್ಲಿ ಭರವಸೆ ಮೂಡಿದೆ. ನೀರಿನ ಹಕ್ಕಿನ ರಕ್ಷಣೆಗಾಗಿ ಸರ್ಕಾರ ನಡೆಸುತ್ತಿರುವ ಪ್ರಯತ್ನ ಅವರಿಗೆ ಸಮಾಧಾನ ತಂದಿದೆ. ನೆಲ-ಜಲ-ಭಾಷೆಯ ರಕ್ಷಣೆಯ ವಿಚಾರದಲ್ಲಿ ರಾಜಿ ಇಲ್ಲದ ನಮ್ಮ ನಿಲುವು ಕನ್ನಡಿಗರ ಮನ ಗೆದ್ದಿದೆ.
ನಾಡಿನ ಇತಿಹಾಸದಲ್ಲಿಯೇ ಅತಿಹೆಚ್ಚು ಬಜೆಟ್ಗಳನ್ನು ಮಂಡಿಸುವ ಅವಕಾಶ ಲಭ್ಯವಾಗಿದ್ದರ ಬಗ್ಗೆ ನನಗೆ ತೃಪ್ತಿ ಇದೆ. ನಾನು ಮಂಡಿಸಿದ ಹದಿನೇಳು ಬಜೆಟ್ಗಳಲ್ಲಿಯೂ ಸಾಮಾಜಿಕ ನ್ಯಾಯ ಹಾಗೂ ಅಭಿವೃದ್ಧಿಪರವಾದ ಯೋಜನೆಗಳಿಗೆ ಸಮಾನ ಪ್ರಾಶಸ್ತ್ಯವನ್ನು ನೀಡಿದ್ದೇನೆ.
ನಾಡು ಕಂಡ ಸುದೀರ್ಘ ಅವಧಿಯ ಮುಖ್ಯಮಂತ್ರಿ ಎಂದು ಇತಿಹಾಸದಲ್ಲಿ ದಾಖಲಾಗುವುದಕ್ಕಿಂತ ಹೆಚ್ಚಾಗಿ ನಾಡಿನ ಅಭಿವೃದ್ಧಿಗೆ, ನಾಡಿನ ಜನತೆಯ ಏಳಿಗೆಗೆ ಕಾರಣವಾಗುವಂತಹ ಮಹತ್ವದ ಯೋಜನೆಗಳನ್ನು ನೀಡಿದ ಮುಖ್ಯಮಂತ್ರಿ ನಾನಾಗಬೇಕು ಎನ್ನುವ ಹಂಬಲದಿಂದ ಇಲ್ಲಿಯವರೆಗೆ ಶ್ರದ್ಧೆಯಿಂದ ಕೆಲಸ ಮಾಡಿದ್ದೇನೆ.
ಕರ್ನಾಟಕದ ಜನತೆ, ವಿಶೇಷವಾಗಿ ನಾಡಿನ ಮೂಲೆಮೂಲೆಗಳಲ್ಲಿರುವ ದೀನದಲಿತರು, ದಮನಿತರು, ದನಿಯಿಲ್ಲದವರು, ಅಶಕ್ತರು, ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದವರು ನನ್ನನ್ನು ತಮ್ಮ ದನಿಯಾಗಿಸಿಕೊಂಡಿದ್ದಕ್ಕೆ ನಾನು ಚಿರಋಣಿಯಾಗಿರುತ್ತೇನೆ. ಅವರು ನನ್ನಲ್ಲಿ ತುಂಬಿದ ಶಕ್ತಿಯಿಂದಾಗಿಯೇ ನಾನು ನಾಡಿನ ಜನತೆಯ ಸೇವೆಯನ್ನು ಇಷ್ಟು ದೀರ್ಘಕಾಲ ಮಾಡಲು ಸಾಧ್ಯವಾಗಿದೆ.
ನನ್ನನ್ನು ನಾಯಕನನ್ನಾಗಿ ಸ್ವೀಕರಿಸಿ ಬೆಂಬಲ ನೀಡಿದ ನನ್ನ ಎಲ್ಲ ಶಾಸಕ ಮಿತ್ರರಿಗೆ, ಸರ್ಕಾರದ ಯಂತ್ರವನ್ನು ಸುಗಮವಾಗಿ ನಡೆಸಿಕೊಂಡು ಹೋಗಲು ಸಹಕಾರ ನೀಡಿದ ಅಧಿಕಾರಿವರ್ಗಕ್ಕೆ ನಾನು ವಿಶೇಷವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.
ರಾಜಕಾರಣಿಗಳಿಗೆ ನಿವೃತ್ತಿ ಇಲ್ಲ, ನಾನು ಚುನಾವಣಾ ರಾಜಕಾರಣದಿಂದ ದೂರ ಸರಿಯಬಹುದು, ಆದರೆ ರಾಜಕೀಯ ಕ್ಷೇತ್ರದಲ್ಲಿರುತ್ತೇನೆ. ಮುಂಬರುವ ದಿನಗಳಲ್ಲಿ ರಾಜ್ಯದ ಜನತೆ ಇಲ್ಲವೆ ಪಕ್ಷ ನೀಡುವ ಕರೆಗೆ ಓಗೊಟ್ಟು ಸಹಕಾರ ನೀಡುತ್ತೇನೆ.. ಮತ್ತೊಮ್ಮೆ ಎಲ್ಲರಿಗೂ ನನ್ನ ಕೃತಜ್ಞತೆಗಳು ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಫಸಲ್ ಭೀಮಾ ಯೋಜನೆಯಲ್ಲಿ ಅಕ್ರಮ | ಗ್ರಾಮ ಆಡಳಿತಾಧಿಕಾರಿ ಕೆ.ಸುರೇಶ ಸೇರಿ 8 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕು ಹಾರಕನಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಹು ಗ್ರಾಮಗಳಲ್ಲಿ ಪ್ರಧಾನಮತ್ರಿ ಫಸಲ್ ಭೀಮಾ ಯೋಜನೆಯ ಅಡಿಯಲ್ಲಿ ನಡೆದಿರುವ ಬಹುಕೋಟಿ ಹಗರಣವನ್ನು ತನಿಖೆಗೆ ಒಳಪಡಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಗ್ರಾಮ ಆಡಳಿತಾಧಿಕಾರಿ ಕೋಸಗಿ ಸುರೇಶ ಸೇರಿ 8 ಅಧಿಕಾರಿಗಳ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಹಾರಕನಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಹುಲಿಕಟ್ಟೆ ಸರ್ಕಲ್ ವ್ಯಾಪ್ತಿಯ ಹಾರಕನಾಳು, ಹುಲಿಕಟ್ಟೆ, ಚನ್ನಳ್ಳಿ ತಾಂಡ, ಈಶಾಪುರ, ಹಾರಕನಾಳು ಸಣ್ಣತಾಂಡ, ಹಾರಕನಾಳು ದೊಡ್ಡತಾಂಡ, ಕನ್ನಾಯಕನಹಳ್ಳಿ ಸೇರಿ ಒಟ್ಟು 07 ಗ್ರಾಮಗಳ ಗ್ರಾಮ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಕೋಸಗಿ ಸುರೇಶ ಎಂಬುವವರು ರೈತರೊಂದಿಗೆ ಒಪ್ಪಂದ ಮಾಡಿಕೊಂಡು, ಪ್ರತಿ ವರ್ಷ ಮುಂಗಾರು, ಹಿಂಗಾರು ಹಾಗೂ ಬೇಸಿಗೆ ಬೆಳೆಗಳಿಗೆ ತಾವೇ ಎಲ್ಲಾ ರೈತರ ಜಮೀನಿಗೆ ಬೆಳೆ ವಿಮೆ ಹಣ ಪಾವತಿಸುವ ಮೂಲಕ ನಿರಂತರವಾಗಿ 3 ವರ್ಷಗಳಿಂದ ಸರ್ಕಾರಕ್ಕೆ ನೂರಾರು ಕೋಟಿ ರೂಪಾಯಿಗಳನ್ನು ವಂಚಿಸುತ್ತ ಬಂದಿರುವ ಮಾಹಿತಿಯು ಸಾಕಷ್ಟು ಪತ್ರಿಕೆಗಳಲ್ಲಿ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟವಾಗಿರುತ್ತದೆ. ಈ ಬಗ್ಗೆ ರೈತರು ಸಾಕಷ್ಟು ಪ್ರತಿಭಟನೆ ನಡೆಸಿ, ಸಂಬಂಧಿಸಿದ ಅಧಿಕಾರಿಗಳಿಗೂ ದೂರು ನೀಡಿರುತ್ತಾರೆ.
ಪ್ರಧಾನಮತ್ರಿ ಫಸಲ್ ಭೀಮಾ ಯೋಜನೆಯಲ್ಲಿನ ಭ್ರಷ್ಟಚಾರದ ಪ್ರಮುಖ ರೂವಾರಿಯಾದ ಕೋಸಗಿ ಸುರೇಶ ಎಂಬುವವರು ತಾವು ಹೆಚ್ಚುವರಿಯಾಗಿ ಕಾರ್ಯನಿರ್ವಹಿಸುತ್ತಿರುವ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಗುಂಡಗತ್ತಿ ಸರ್ಕಲ್ ವ್ಯಾಪ್ತಿಯ ಬಹು ಗ್ರಾಮಗಳಲ್ಲಿಯೂ ಫಸಲ್ ಭೀಮಾ ಯೋಜನೆಯಲ್ಲಿ (ಕರ್ನಾಟಕ ರೈತ ಸುರಕ್ಷಾ ಫಸಲ್ ಭೀಮಾ ಯೋಜನೆ) ಸಾಕಷ್ಟು ಅವ್ಯವಹಾರ ನಡೆಸುತ್ತ ಬಂದಿರುತ್ತಾರೆ ಎಂಬ ಅಧಿಕೃತ ಮಾಹಿತಿ ಇರುತ್ತದೆ. ಇವರು ತಾವು ಕೆಲಸ ಮಾಡಿದ ಎಲ್ಲಾ ಸ್ಥಳಗಳಲ್ಲಿಯೂ ಸಾಕಷ್ಟು ಅವ್ಯವಹಾರದಲ್ಲಿ ಭಾಗಿಯಾಗಿದ್ದು, ಸಾಕಷ್ಟು ರೈತರಿಗೆ ಸರ್ಕಾರಿ ಯೋಜನೆಗಳನ್ನು ಮಾಡಿಸಿಕೊಡುವುದಾಗಿ ಕೋಟ್ಯಾಂತರ ರೂಪಾಯಿ ಲಂಚ ಪಡೆದಿರುತ್ತಾರೆ. ಹಾಗೆಯೇ ಬಡವರು, ಅಸಹಾಯಕರ ಜಮೀನುಗಳನ್ನು ಪ್ರಬಲರ ಹೆಸರಿಗೆ ವರ್ಗಾಹಿಸುವ ನೀಚ ಪ್ರವೃತ್ತಿಯನ್ನು ಮುಂದುವರೆಸಿಕೊಂಡು ಬಂದಿರುತ್ತಾರೆ.
ಬಡವರ ಜಮೀನುಗಳನ್ನು ಪ್ರಬಲರ ಹೆಸರಿಗೆ ಮಾಡಿದ ಎಷ್ಟೋ ಪ್ರಕರಣಗಳು ಬೆಳಕಿಗೆ ಬಂದು ನಂತರ ಮೂಲ ಖಾತೆದಾರರಿಗೆ ವರ್ಗಾವಣೆಯಾಗಿರುವ ಸಾಕಷ್ಟು ನಿದರ್ಶನಗಳಿಗೆ. ಆದರೆ ಯಾವುದೇ ಒಂದು ಪ್ರಕರಣದಲ್ಲಿಯೂ ಈ ಅಧಿಕಾರಿಗೆ ಶಿಕ್ಷೆಯಾಗದಂತೆ ಹಿರಿಯ ಅಧಿಕಾರಿಗಳರಿವರನ್ನು ಕಾಪಾಡಿಕೊಂಡು ಬಂದಿರುತ್ತಾರೆ. ಈ ಕಾರಣಕ್ಕಾಗಿಯೇ ಫಸಲ್ ಭೀಮಾ ಯೋಜನೆಯಂತಹ ದೊಡ್ಡ ಮಟ್ಟದ ಹಗರಣಕ್ಕೂ ಮುಂದಾಗಿರುತ್ತಾರೆ.
ಈ ಎಲ್ಲಾ ಪ್ರಕರಣಗಳನ್ನು ಆಧಾರವಾಗಿಟ್ಟುಕೊಂಡು ಫಸಲ್ ಭೀಮಾ ಯೋಜನೆಯ ಅವ್ಯವಹಾರದಲ್ಲಿ ಭಾಗಿಯಾಗಿರುವ ಹಾರಕನಾಳು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾದ ಶ್ರೀ ಎಂ.ಶಿವಣ್ಣ, ಕಂದಾಯ ನಿರೀಕ್ಷಕ ಶ್ರೀ ರಾಘವೇಂದ್ರ, ಹರಪನಹಳ್ಳಿ ತಾಲ್ಲೂಕು ಉಪ ತಹಶೀಲ್ದಾರರಾದ ಶ್ರೀಮತಿ ಕವಿತಾ, ತಹಶೀಲ್ದಾರರಾದ ಶ್ರೀ ಬಿ.ವಿ. ಗಿರೀಶ್ಬಾಬು, ಉಪವಿಭಾಗಾಧಿಕಾರಿಯಾದ ಶ್ರೀ ಸುರೇಶ್ಕುಮಾರ್ ಟಿ, ಹರಪನಹಳ್ಳಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯಾದ ಶ್ರೀ ವೈ.ಹೆಚ್. ಚಂದ್ರಶೇಖರ್, ವಿಜಯನಗರ ಜಿಲ್ಲಾಧಿಕಾರಿಗಳಾದ ಶ್ರೀಮತಿ ಕವಿತಾ ಮನ್ನಿಕೇರಿ ಇವರುಗಳ ವಿರುದ್ಧ ದೂರು ದಾಖಲಿಸಿ, ಈ ಎಲ್ಲಾ ಅಧಿಕಾರಿಗಳನ್ನು ತನಿಖೆಗೆ ಒಳಪಡಿಸಿ, ತಪ್ಪಿತಸ್ಥರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಕೋರಲಾಗಿದೆ ಎಂಬುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಯು.ಬಿ.ಡಿ.ಟಿ. ಇಂಜಿನಿಯರಿಂಗ್ ಕಾಲೇಜಿನ ಭವ್ಯ ‘ವಜ್ರ ಮಹೋತ್ಸವ’ ಆಚರಣೆ; ಉಪರಾಷ್ಟ್ರಪತಿ ಹಾಗೂ ಮುಖ್ಯಮಂತ್ರಿಗಳ ಆಗಮನ
ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಪ್ರತಿಷ್ಠಿತ ವಿಶ್ವವಿದ್ಯಾಲಯ ಯು.ಬಿ.ಡಿ.ಟಿ. ಇಂಜಿನಿಯರಿಂಗ್ ಕಾಲೇಜು ತನ್ನ 75 ವರ್ಷಗಳ ಅತ್ಯುತ್ತಮ ಶೈಕ್ಷಣಿಕ ಸೇವೆಯ ನೆನಪಿಗಾಗಿ (1951-2026) ಹಮ್ಮಿಕೊಂಡಿರುವ ಭವ್ಯ “ವಜ್ರ ಮಹೋತ್ಸವ ಕಾರ್ಯಕ್ರಮವು ಮೇ 29 ಮತ್ತು 30 ರಂದು ಕಾಲೇಜಿನ ಆವರಣದಲ್ಲಿ ಜರುಗಲಿದೆ.
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (VTU) ಅಂಗಸಂಸ್ಥೆಯಾಗಿರುವ ಈ ಕಾಲೇಜಿನ ಉದ್ಘಾಟನಾ ಸಮಾರಂಭವು ಮೇ 29 ರ ಶುಕ್ರವಾರ ಮಧ್ಯಾಹ್ನ 12:00 ಗಂಟೆಗೆ ಆರಂಭವಾಗಲಿದ್ದು, ದೇಶ ಹಾಗೂ ರಾಜ್ಯದ ಗಣ್ಯಾತಿಗಣ್ಯರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಶ್ರೀ ಸಿ. ಪಿ. ರಾಧಾಕೃಷ್ಣನ್, ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರು ಹಾಗೂ ವಿ.ಟಿ.ಯು. ಕುಲಾಧಿಪತಿಗಳಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಮತ್ತು ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಆಗಮಿಸಲಿದ್ದಾರೆ.
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ, ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಗಣಿ ಮತ್ತು ಭೂ ವಿಜ್ಞಾನ , ತೋಟಗಾರಿಕೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಎಸ್. ಮಲ್ಲಿಕಾರ್ಜುನ್, ಉನ್ನತ ಶಿಕ್ಷಣ ಸಚಿವರಾದ ಡಾ. ಎಂ. ಸಿ. ಸುಧಾಕರ್, ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್, ಮೈಸೂರು-ಕೊಡಗು ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ರಾಷ್ಟ್ರೀಯ ತಾಂತ್ರಿಕ ಶಿಕ್ಷಣ ಮಂಡಳಿ (FTE&M) ಅಧ್ಯಕ್ಷರಾದ ಪ್ರೊ. ಟಿ. ಜಿ. ಸಿತಾರಾಮ್ ಅವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ.
ವಿ.ಟಿ.ಯು ಕುಲಪತಿಗಳಾದ ಡಾ. ಎಸ್. ವಿದ್ಯಾಶಂಕರ್, ರಿಜಿಸ್ಟ್ರಾರ್ ಡಾ. ಪ್ರಸಾದ್ ಬಿ ರಾಂಪುರೆ , ರಿಜಿಸ್ಟ್ರಾರ್ (ಮೌಲ್ಯಮಾಪನ) ಡಾ.ಉಜ್ವಲ್ ಯು.ಜೆ , ಹಣಕಾಸು ಅಧಿಕಾರಿ ಡಾ. ಪ್ರಶಾಂತ್ ನಾಯಕ್ , ಯು.ಬಿ.ಡಿ.ಟಿ.ಇ ಪ್ರಾಂಶುಪಾಲರಾದ ಡಾ. ಡಿ. ಪಿ. ನಾಗರಾಜಪ್ಪ ಮತ್ತು ವಿವಿ ಪದಾಧಿಕಾರಿಗಳು ಕಾರ್ಯಕ್ರಮದ ಆತಿಥ್ಯ ವಹಿಸಲಿದ್ದಾರೆ.
ವಿಶೇಷ ಅತಿಥಿಗಳಾಗಿ ಶಾಸಕರುಗಳಾದ ಶಾಂತನಗೌಡ ಡಿ.ಜಿ., ಬಿ. ದೇವೇಂದ್ರಪ್ಪ, ಬಿ. ಪಿ. ಹರೀಶ್, ಶ್ರೀ ಬಸವರಾಜು ವಿ. ಶಿವಗಂಗಾ, ಕೆ. ಎಸ್. ಬಸವಂತಪ್ಪ, ಸಮರ್ಥ್ ಶಾಮನೂರು, ವಿಧಾನಪರಿಷತ್ ಸದಸ್ಯರುಗಳಾದ ಎಸ್.ಎಲ್. ಭೋಜೆಗೌಡ, ಡಿ.ಎಸ್.ಅರುಣ್, ಡಾ. ಧನಂಜಯ್ ಸರ್ಜಿ, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್ ಹಾಗೂ ಚಳ್ಳಕೆರೆ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು, ಕಾಲೇಜಿನ ಹಳೆಯ ವಿದ್ಯಾರ್ಥಿ ಟಿ. ರಘುಮೂರ್ತಿ , ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮಾಜಿ ಸಂಸದರು ಕಾಲೇಜಿನ ಹಳೆಯ ವಿದ್ಯಾರ್ಥಿ ಜನಾರ್ಧನ ಸ್ವಾ̧ಮಿ ವಿಶೇಷ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಅಲ್ಪಸಂಖ್ಯಾತರ ಇಲಾಖೆ ನಿರ್ದೇಶಕ ಜಿಲಾನಿ ಎಚ್. ಮೊಕಾಶಿ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ1 day agoಫಸಲ್ ಭೀಮಾ ಯೋಜನೆಯಲ್ಲಿ ಅಕ್ರಮ | ಗ್ರಾಮ ಆಡಳಿತಾಧಿಕಾರಿ ಕೆ.ಸುರೇಶ ಸೇರಿ 8 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoವಂಚನೆ | ಗಜೇಂದ್ರಗಡ ಶ್ರೀ ಅನ್ನದಾನೇಶ್ವರ ಐ.ಟಿ.ಐ ಕಾಲೇಜು ಪ್ರಾಂಶುಪಾಲ ಅಮರಪ್ಪ ಗಾಣಿಗೇರ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoದಾವಣಗೆರೆ | ಇಂದು ಕರೆಂಟ್ ಇರಲ್ಲ
-
ದಿನದ ಸುದ್ದಿ2 days agoಯು.ಬಿ.ಡಿ.ಟಿ. ಇಂಜಿನಿಯರಿಂಗ್ ಕಾಲೇಜಿನ ಭವ್ಯ ‘ವಜ್ರ ಮಹೋತ್ಸವ’ ಆಚರಣೆ; ಉಪರಾಷ್ಟ್ರಪತಿ ಹಾಗೂ ಮುಖ್ಯಮಂತ್ರಿಗಳ ಆಗಮನ
-
ದಿನದ ಸುದ್ದಿ19 hours ago‘ಮತದಾರ ದೇವರು’ ಎಂದ ಸಿದ್ದರಾಮಯ್ಯ


