ದಿನದ ಸುದ್ದಿ
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
ರಾಜ್ಯದ 28ಲೋಕಸಭಾ ಮತಕ್ಷೇತ್ರಗಳನ್ನು ಒಳಗೊಂಡ ಜಿಲ್ಲೆಗಳಲ್ಲಿ ನಡೆದಿರುವ ಚುನಾವಣಾ ಚಟುವಟಿಕೆಗಳ ಬಗ್ಗೆ ಮಾಹಿತಿ
ಸುದ್ದಿದಿನ ಡೆಸ್ಕ್ : ದಾವಣಗೆರೆಯಲ್ಲಿ ಚುನಾವಣಾ ಕಾರ್ಯಗಳ ವೀಕ್ಷಣೆ ಮತ್ತು ನಿಯಂತ್ರಣಕ್ಕಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಾರ್ರೂಮ್ ಆರಂಭಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಮತದಾರರ ಪಟ್ಟಿಯ ಜಿಲ್ಲಾ ನೋಡಲ್ ಅಧಿಕಾರಿ ಗುಂಜನ್ ಕೃಷ್ಣ ಇಂದು ವಾರ್ರೂಮ್ಗೆ ಭೇಟಿ ನೀಡಿ ಪರಿಶೀಲಿಸಿದರು. ವಿದ್ಯುನ್ಮಾನ ಮಾಧ್ಯಮಗಳ ವೀಕ್ಷಣೆಗಾಗಿ ಟಿ.ವಿ. ಅಳವಡಿಕೆ, ಸ್ಥಳೀಯ ವಾಹಿನಿಗಳು ಮತ್ತು ಸಾಮಾಜಿಕ ಜಾಲತಾಣ ವೀಕ್ಷಣೆ ಹಾಗೂ ಪ್ರತಿ ತಾಲೂಕಿಗೆ ಚುನಾವಣಾ ಕಾರ್ಯಗಳ ವೀಕ್ಷಣಾ ವರದಿಗಾಗಿ ನೋಡಲ್ ಅಧಿಕಾರಿಗಳ ನೇಮಕ ಕುರಿತಂತೆ ಮಾಹಿತಿ ಪಡೆದರು.
ಮತದಾರರು ವಿ.ಎಚ್.ಎ. ಆಪ್ ಅನ್ನು ಡೌನ್ಲೋಡ್ ಮಾಡಿಕೊಂಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವ ಬಗ್ಗೆ ಪರಿಶೀಲಿಸಬಹುದು ಎಂದು ತಿಳಿಸಿದರು.
ಯಾದಗಿರಿ
ಯಾದಗಿರಿ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ಸಂಬಂಧ ಮುದ್ರಣವಾಗುವ ಪ್ರಚಾರ ಸಾಮಾಗ್ರಿಗಳ ಮೇಲೆ ಮುದ್ರಕರು ಮತ್ತು ಪ್ರಕಾಶಕರ ಹೆಸರು, ವಿಳಾಸವನ್ನು ಕಡ್ಡಾಯವಾಗಿ ನಮೂದಿಸಬೇಕು.
ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದ ಕರಪತ್ರ, ಹ್ಯಾಂಡ್ಬಿಲ್, ಬಂಟಿಂಗ್ ಬ್ಯಾನರ್ಗಳ ಮೇಲೆ ಮುದ್ರಕರು ಮತ್ತು ಪ್ರಕಾಶಕರ ವಿವರಗಳು ಹಾಗೂ ಮುದ್ರಣ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕು. ನಿಯಮ ಉಲ್ಲಂಘಿಸಿದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಬಿ. ಸುಶೀಲಾ ತಿಳಿಸಿದ್ದಾರೆ.
ದಕ್ಷಿಣ ಕನ್ನಡ
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಚುನಾವಣೆ ನಡೆಯುವ ಏಪ್ರಿಲ್ 26ರಂದು ಸರ್ಕಾರದ 18 ಸಾವಿರ ಅಧಿಕಾರಿಗಳು ಮತ್ತು ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ. ಚುನಾವಣಾಆಯೋಗದ ನಿರ್ದೇಶನದಂತೆ ಮತಗಟ್ಟೆಗಳಲ್ಲಿ ಅಗತ್ಯ ಮೂಲಸೌಕರ್ಯಗಳಾದ ಕುಡಿಯುವ ನೀರು, ವಿದ್ಯುತ್ ದೀಪಗಳು, ಶೌಚಾಲಯ, ವಿಶೇಷಚೇತನ ಮತದಾರರಿಗೆ ಗಾಲಿ ಕುರ್ಚಿ, ಇತ್ಯಾದಿ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮುಲೈ ಮುಹಿಲನ್ ತಿಳಿಸಿದ್ದಾರೆ.
ಮಂಗಳೂರು
ಮಂಗಳೂರು ನಗರದಲ್ಲಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ನಿರತರಾಗಿರುವ 12 ಆರೋಪಿಗಳನ್ನು ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ. ಕಾನೂನು ಸುವ್ಯವಸ್ಥೆ ಪಾಲನೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಳ್ಳಾರಿ
ಬಳ್ಳಾರಿ ಜಿಲ್ಲೆಯಲ್ಲಿ ಮತದಾನದ ಶೇಕಡಾವಾರು ಪ್ರಮಾಣ ಹೆಚ್ಚಳಕ್ಕೆ ಜಿಲ್ಲಾ ಸ್ವೀಪ್ ಸಮಿತಿ ಹಲವು ಕ್ರಮಗಳನ್ನು ಕೈಗೊಂಡಿದ್ದು, ಮನೆಗಳಿಂದ ದೂರವಿದ್ದು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ಪತ್ರ ಬರೆದು ಆಮಿಷಕ್ಕೆ ಒಳಗಾಗದೇ ಮತದಾನ ಮಾಡಬೇಕೆಂದು ಮನವಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ.
ಜಿಲ್ಲಾ ಮತ್ತು ತಾಲೂಕು ಮಟ್ಟದ 295ಶಾಲೆಗಳು ಮತ್ತು ವಸತಿ ನಿಲಯಗಳಲ್ಲಿ ಇರುವ ಅಂದಾಜು 15ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಅವರ ಪೋಷಕರಿಗೆ ಈ ಸಂಬಂಧ ಪತ್ರ ಬರೆಸುವ ಅಭಿಯಾನ ನಡೆಸಲಾಗುತ್ತಿದೆ.
ಚಿತ್ರದುರ್ಗ
ಚಿತ್ರದುರ್ಗ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಂದೂಕು ಪರವಾನಗಿ ಪಡೆದಿರುವ ನಾಗರಿಕರು ತಮ್ಮಲ್ಲಿರುವ ಎಲ್ಲಾ ಬಗೆಯ ಶಸ್ತ್ರಾಸ್ತ್ರಗಳನ್ನು ಪೊಲೀಸ್ ಠಾಣೆಗಳಿಗೆ ಒಪ್ಪಿಸಬೇಕು ಮತ್ತು ಇದಕ್ಕೆ ಸೂಕ್ತ ರಶೀದಿಯನ್ನು ಪಡೆಯಬೇಕು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಸೂಚಿಸಿದ್ದಾರೆ.
ಹಾವೇರಿ
ಹಾವೇರಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣ ಹೆಚ್ಚಳಕ್ಕೆ ಅಗತ್ಯ ಕ್ರಮಗಳನ್ನು ಆರಂಭಿಸಲಾಗಿದೆ. ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಶೇಕಡ 71.63ರಷ್ಟು ಮತದಾನವಾಗಿತ್ತು. ಮತದಾನದ ಮಹತ್ವ ತಿಳಿಸುವ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಅಕ್ಷಯ ಶ್ರೀಧರ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಅಂದಾಜು ಒಂದು ಕೋಟಿ 20 ಲಕ್ಷ ರೂಪಾಯಿ ಮೌಲ್ಯದ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ರಘುನಂದನ ಮೂರ್ತಿ ತಿಳಿಸಿದ್ದಾರೆ.
ಉತ್ತರ ಕನ್ನಡ
ಉತ್ತರಕನ್ನಡ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ಮೇ 7 ರಂದು ನಡೆಯಲಿದ್ದು, ಯುವ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನದ ಹಕ್ಕು ಚಲಾಯಿಸಬೇಕು. ಯಾವುದೇ ಆಮಿಷ ಅಥವಾ ಪ್ರಭಾವಗಳಿಗೆ ಒಳಗಾಗದೇ ನಿರ್ಭೀತಿಯಿಂದ ಮತದಾನ ಮಾಡಬೇಕು ಎಂದು ಸ್ವೀಪ್ ಸಮಿತಿ ವತಿಯಿಂದ ಮಜಾಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಮತದಾರರ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಹೇಳಿದರು.
ವಿಜಯನಗರ
ವಿಜಯನಗರ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅಕ್ರಮ ಹಣಕಾಸು ಸಾಗಾಟ ಪ್ರಕರಣಗಳ ಮೇಲೆ ಕಣ್ಣಿಡಬೇಕು. ಅನುಮಾನಾಸ್ಪದ ಬ್ಯಾಂಕ್ ವ್ಯವಹಾರಗಳ ಮೇಲೆ ತೀವ್ರ ನಿಗಾ ಇಡಬೇಕು ಎಂದು ಜಿಲ್ಲಾಧಿಕಾರಿ ದಿವಾಕರ್ ಎಂ.ಎನ್., ಜಿಲ್ಲೆಯ ಬ್ಯಾಂಕ್ ಅಧಿಕಾರಿಗಳಿಗೆ ಸೂಚಿಸಿದರು.
ಬೆಂಗಳೂರು ಗ್ರಾಮಾಂತರ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿಂದು ಮತದಾರರ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು. ನಗರ ಪ್ರದೇಶಗಳಲ್ಲಿ ಮತದಾನದ ಪ್ರಮಾಣ ಕುಸಿಯುತ್ತಿರುವುದು ಆತಂಕದ ಬೆಳವಣಿಗೆಯಾಗಿದೆ. ಪ್ರಜಾಪ್ರಭುತ್ವದ ಪ್ರಮುಖ ಅಂಗವಾಗಿರುವ ಮತದಾನದಲ್ಲಿ ಅರ್ಹ ಮತದಾರರೆಲ್ಲರೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ನಗರಸಭೆ ಪೌರಾಯುಕ್ತ ಕೆ. ಪರಮೇಶ್ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243