ದಿನದ ಸುದ್ದಿ
ದಾವಣಗೆರೆ | ಏಪ್ರಿಲ್ 22ರಿಂದ ಉಪಲೋಕಾಯುಕ್ತರ ಪ್ರವಾಸ : ಸಾರ್ವಜನಿಕರಿಂದ ಅಹವಾಲು ಸ್ವೀಕಾರ
ಸುದ್ದಿದಿನ,ದಾವಣಗೆರೆ:ನ್ಯಾಯಮೂರ್ತಿಗಳು ಹಾಗೂ ರಾಜ್ಯದ ಉಪಲೋಕಾಯುಕ್ತರಾದ ಬಿ.ವೀರಪ್ಪನವರು ಏಪ್ರಿಲ್ 22 ರಿಂದ 26 ರ ವರೆಗೆ ದಾವಣಗೆರೆ ಜಿಲ್ಲೆಗೆ ಭೇಟಿ ನೀಡುತ್ತಿದ್ದು ಸಾರ್ವಜನಿಕರಿಂದ ಅಹವಾಲು ಸ್ವೀಕಾರ, ವಿವಿಧ ಕಚೇರಿಗಳಿಗೆ ಭೇಟಿ ನೀಡಿ ಲೋಕಾಯುಕ್ತ ಪ್ರಕರಣಗಳ ಸಾರ್ವಜನಿಕ ವಿಚಾರಣೆ ನಡೆಸುವರು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ತಿಳಿಸಿದರು.
ಅವರು ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಉಪಲೋಕಾಯುಕ್ತರು ಹಾಗೂ ಅವರೊಂದಿಗೆ ಆಗಮಿಸುವ ಅಪರ ನಿಬಂಧಕರು, ಉಪನಿಬಂಧಕರ ಪ್ರವಾಸದ ಬಗ್ಗೆ ಮಾಹಿತಿ ನೀಡಿದರು. ಉಪಲೋಕಾಯುಕ್ತರು ಏಪ್ರಿಲ್ 22 ರಂದು ರಾತ್ರಿ 8.30 ಕ್ಕೆ ದಾವಣಗೆರೆಗೆ ಆಗಮಿಸಿ ಸಕ್ರ್ಯೂಟ್ಹೌಸ್ನಲ್ಲಿ ವಾಸ್ತವ್ಯ ಹೂಡುವರು.
ಏ.23 ರಂದು ಬೆಳಗ್ಗೆ 6.30 ರಿಂದ ವಿವಿಧ ಸ್ಥಳಗಳಿಗೆ ಭೇಟಿ ನೀಡುವರು. ಬೆ. 9.45 ರಿಂದ 10.45 ರವರೆಗೆ ದಾವಣಗೆರೆ ನ್ಯಾಯಾಂಗ ಸಂಕೀರ್ಣದಲ್ಲಿನ ಬಾರ್ ಅಸೋಸಿಯೇಷನ್ನಲ್ಲಿ ವಕೀಲರೊಂದಿಗೆ ಸಂವಾದ ನಡೆಸುವರು. ಬೆ.11 ರಿಂದ 1.30 ರವರೆಗೆ ವಿವಿಧ ಸ್ಥಳಗಳಿಗೆ ಭೇಟಿ ನೀಡುವರು. ಮತ್ತು ಮ.2.30 ರಿಂದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ವಾಸ್ತವ್ಯ ಹೂಡುವರು.
ಏ.24 ರಂದು ಬೆಳಗ್ಗೆ 6.30 ರಿಂದ ವಿವಿಧ ಸ್ಥಳಗಳಿಗೆ ಭೇಟಿ ನೀಡುವರು. ಬೆ.10 ರಿಂದ ಮಧ್ಯಾಹ್ನ 1.30 ರವರೆಗೆ ಜಿಲ್ಲಾಡಳಿತ ಭವನದಲ್ಲಿನ ತುಂಗಭದ್ರಾ ಸಭಾಂಗಣದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ವಿಚಾರಣೆ ನಡೆಸುವರು. ಮತ್ತು ಇದೇ ಸ್ಥಳದಲ್ಲಿ ಮಧ್ಯಾಹ್ನ2.30 ರಿಂದ ಸಂಜೆ 5 ಗಂಟೆಯವರೆಗೆ ಸಾರ್ವಜನಿಕರಿಂದ ಕುಂದುಕೊರತೆ ಅಹವಾಲು, ದೂರು, ಪ್ರಕರಣಗಳನ್ನು ಸ್ವೀಕರಿಸುವರು.
ಸಂಜೆ 5.30 ರಿಂದ 6.30 ರವರೆಗೆ ತುಂಗಭದ್ರಾ ಸಭಾಂಗಣದಲ್ಲಿ ಕಂದಾಯ, ಪಂಚಾಯತ್ ರಾಜ್, ಶಿಕ್ಷಣ, ರೇಷ್ಮೆ, ಕೃಷಿ, ತೋಟಗಾರಿಕೆ, ಸಾರಿಗೆ, ಸಮಾಜ ಕಲ್ಯಾಣ ಹಾಗೂ ವಿವಿಧ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಲೋಕಾಯುಕ್ತ ಕಾಯಿದೆ ಹಾಗೂ ಕಾನೂನು ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಸ್ತವ್ಯ ಹೂಡುವರು.
ಏಪ್ರಿಲ್ 25 ರಂದು ಬೆಳಗ್ಗೆ 6.30 ರಿಂದ ವಿವಿಧ ಸ್ಥಳಗಳಿಗೆ ಭೇಟಿ ನೀಡುವರು. ಬೆ.10 ರಿಂದ ಮಧ್ಯಾಹ್ನ 1.45 ರವರೆಗೆ ಮತ್ತು ಮಧ್ಯಾಹ್ನ 2.30 ರಿಂದ ಸಂಜೆ 6 ಗಂಟೆಯವರೆಗೆ ತುಂಗಭದ್ರಾ ಸಭಾಂಗಣದಲ್ಲಿ ಲೋಕಾಯುಕ್ತದಲ್ಲಿ ಬಾಕಿ ಇರುವ ಲೋಕಾಯುಕ್ತ ಪ್ರಕರಣಗಳ ವಿಚಾರಣೆ ನಡೆಸುವರು. ಸಂಜೆ 6 ರಿಂದ 7 ರವರೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನ್ಯಾಯಾಂಗ ಅಧಿಕಾರಿಗಳು ಹಾಗೂ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ ವಾಸ್ತವ್ಯ ಹೂಡುವರು. ಏ.26 ರಂದುಬೆಳಗ್ಗೆ 7 ಕ್ಕೆ ಬೆಂಗಳೂರಿಗೆ ಪ್ರಯಾಣಿಸುವರು.
ಲೋಕಾಯುಕ್ತಕ್ಕೆ ದೂರು ಸಲ್ಲಿಸಬಹುದಾದ ಪ್ರಕರಣ; ಸಾರ್ವಜನಿಕರು ಸರ್ಕಾರಿ ಇಲಾಖೆಗಳಿಗೆ ಸಂಬಂಧಿಸಿದಂತೆ ಯಾವುದೇ ಅರ್ಜಿಗಳನ್ನು ವಿಲೇ ಮಾಡದೇ ಬಾಕಿ ಇಟ್ಟಿರುವ ಬಗ್ಗೆ ಹಾಗೂ ಸೌಲಬ್ಯ, ಸೇವೆ ಒದಗಿಸುವಲ್ಲಿ ವಿಳಂಬ, ತಾರತಮ್ಯ, ನಿಯಮ ಪಾಲನೆ ಮಾಡದಿದ್ದಲ್ಲಿ ಏ.24 ರಂದು ತುಂಗಭದ್ರಾ ಸಭಾಂಗಣದಲ್ಲಿ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕರಿಸಲು ವಿವಿಧ ಕೌಂಟರ್ಗಳನ್ನು ಇದಕ್ಕಾಗಿ ತೆರೆಯಲಾಗಿರುತ್ತದೆ. ಯಾವುದೇ ಭಯವಿಲ್ಲದೇ ತಮ್ಮ ದೂರುಗಳನ್ನು ಉಪಲೋಕಾಯುಕ್ತರಿಗೆ ಸಲ್ಲಿಸಬಹುದಾಗಿದೆ. ದೂರು ಸಲ್ಲಿಸಲು ಪ್ರತ್ಯೇಕ ಕೌಂಟರ್ಗಳನ್ನು ತೆರೆಯಲಾಗಿರುತ್ತದೆ, ದೂರು ನೀಡಲು ಆಗಮಿಸುವ ಸಾರ್ವಜನಿಕರಿಗೆ ಅಗತ್ಯವಿರುವ ಕುಡಿಯುವ ನೀರು ಮತ್ತು ಮಧ್ಯಾಹ್ನ ಉಪಹಾರವನ್ನು ವ್ಯವಸ್ಥೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಜಿಲ್ಲೆಯ ಅಭಿವೃದ್ದಿಯ ಹಿನ್ನಲೆ ಹಾಗೂ ಜನರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಮತ್ತು ಹಲವು ಸುಧಾರಣೆಗಳನ್ನು ಜಾರಿ ಮಾಡಲು ಎಲ್ಲಾ ಅಧಿಕಾರಿಗಳು ಸೇರಿ ತಂಡವಾಗಿ ಕೆಲಸ ಮಾಡಲಾಗುತ್ತಿದೆ. ಈಗಾಗಲೇ ಸಂಚಾರಿ ನಿಯಮ ಜಾರಿ, ಹೆಲ್ಮೆಟ್ ಕಡ್ಡಾಯ, ಕಾನೂನು ಸುವ್ಯವ್ಯಸ್ಥೆ, ಕಂದಾಯ ಇಲಾಖೆಯಲ್ಲಿ ಪ್ರಕರಣಗಳ ಶೀಘ್ರ ಇತ್ಯರ್ಥ ಸೇರಿದಂತೆ ಹಲವಾರು ಆಡಳಿತ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರಿಂದ ಜಿಲ್ಲೆಯ ಎಲ್ಲಾ ಆಯಾಮಗಳಲ್ಲಿ ರಾಜ್ಯದ ರ್ಯಾಂಕಿಂಗ್ನಲ್ಲಿ 5 ರೊಳಗೆ ಇರುತ್ತದೆ ಎಂದರು.
ಜನರ ಇನ್ನಷ್ಟು ಕುಂದುಕೊರತೆಗಳ ನಿವಾರಣೆಗಾಗಿ ಜನರ ಬಳಿ ಆಡಳಿತ ಕೊಂಡೊಯ್ಯಲು ಜನತಾದರ್ಶನ ಕಾರ್ಯಕ್ರಮವನ್ನು ಏಪ್ರಿಲ್ ಅಂತ್ಯದಿಂದ ಆರಂಭಿಸಲಾಗುತ್ತದೆ ಎಂದರು.
ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್.ಕೌಲಾಪೂರೆ ಮಾತನಾಡಿ ಸರ್ಕಾರಿ ಇಲಾಖೆಗೆ ಸಂಬಂಧಿಸಿದ ಆಡಳಿತ ಪಕ್ಷಪಾತ, ತಾರತಮ್ಯ, ವಿಳಂಬ ನೀತಿಯನ್ನು ಅನುಸರಿಸುತ್ತಿದ್ದಲ್ಲಿ ಲೋಕಾಯುಕ್ತಕ್ಕೆ ದೂರು ನೀಡಬಹುದಾಗಿದೆ ಎಂದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ್ ಮ.ಕರಣ್ಣವರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮೆಗಾ ಉದ್ಯೋಗ ಮೇಳ ವಿದ್ಯಾಭ್ಯಾಸದೊಂದಿಗೆ ಕೌಶಲ್ಯತೆಗೂ ಆದ್ಯತೆ ನೀಡಿ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್
ಸುದ್ದಿದಿನ,ದಾವಣಗೆರೆ:ಮಕ್ಕಳಿಗೆ ಸರಿಯಾದ ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ಶಿಕ್ಷಣಕ ಕಲಿಸಬೇಕು. ಯುವ ಜನತೆ ವಿದ್ಯಾರ್ಥಿ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ಸೋಮವಾರ(ಫೆ.23) ರಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಅಭಿಯಾನ, ಮಹಾನಗರಪಾಲಿಕೆ, ಜಿಲ್ಲಾ ಕೌಶಲ್ಯಾ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು
ಯುವನಿಧಿ ಯೋಜನೆಯಡಿ ರಾಜ್ಯದಲ್ಲಿ 3,62,000 ಅಭ್ಯರ್ಥಿಗಳು ನೋಂದಾಯಿಸಿಕೊAಡಿದ್ದು, ಜಿಲ್ಲೆಯಲ್ಲಿ 10,404 ಪದವಿಧರರು, 226 ಡಿಪ್ಲೋಮ ಆದವರು ಯುವನಿಧಿಯ ಸೌಲಭ್ಯ ಪಡೆಯುತ್ತಿದ್ದಾರೆ. ಇದರಲ್ಲಿ 2326 ಯುವಕ, ಯುವತಿಯರಿಗೆ ಬೇರೆ ಬೇರೆ ಉದ್ಯೋಗ ಮೇಳದಲ್ಲಿ ಉದ್ಯೋಗ ದೊರತಿದೆ. 2024-25ನೇ ಸಾಲಿನಲ್ಲಿ ಸುಮಾರು 33 ಕೋಟಿ, 22 ಲಕ್ಷ ಹಣ ಸಂದಾಯವಾಗಿದೆ. ರಾಜ್ಯದಲ್ಲಿ ಕೌಶಲ್ಯಾಭಿವೃದ್ದಿ ಯೋಜನೆಯಡಿ 17,715 ಅಭ್ಯರ್ಥಿಗಳಿಗೆ ತರಬೇತಿ ನೀಡಿದ್ದು, 2376 ಅಭ್ಯರ್ಥಿಗಳಿಗೆ ಉದ್ಯೋಗ ದೊರತಿದೆ.
ಜೊತೆಗೆ ಪದವಿ ಉತ್ತೀರ್ಣ ವಿದ್ಯಾರ್ಥಿಗಳು ಸಿವಿಲ್ ಸರ್ವಿಸಸ್ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ ನೀಡಲಾಗುತ್ತಿದೆ. ಒಟ್ಟಾರೆ ಯುವಜನತೆಗೆ ಐಎಎಸ್, ಕೆಎಎಸ್ ಈ ರೀತಿಯ ಉದ್ಯೋಗಾವಕಾಶಗಳು ಸಿಗುವಂತಾಗಲು ಎಸ್ಎಸ್ ಕೇರ್ ಟ್ರಸ್ಟ್ ನಿಂದ ತರಬೇತಿ ನೀಡಲಾಗುತ್ತಿದೆ.
ಯುವಕರು ಸ್ಕೂಲ್, ಕಾಲೇಜ್ಗೆ ಬಂದಾಗ ಅಲ್ಲಿರುವಂತಹ ವಿದ್ಯಾರ್ಥಿಗಳು ಸ್ಪೋರ್ಟ್ಸ್, ಕಲ್ಚರಲ್ ಆಕ್ಟಿವಿಟೀಸ್, ಜೊತೆಗೆ ಆನ್ಲೈನ್ ಕೋರ್ಸ್ಗಳಲ್ಲಿ ಭಾಗವಹಿಸಬೇಕು.
ಯಾವುದೇ ಕಂಪನಿಯ ಲಿಖಿತ ಪರೀಕ್ಷೆಗೆ ಹಾಜರಾದಾಗ ನಿಮ್ಮಲ್ಲಿ ಏನು ಲೋಪದೋಷ ಹೇಳಿದ್ರು, ಯಾವ ರೀತಿ ನೀವು ಮತ್ತೊಮ್ಮೆ ನಿಮ್ಮ ತಪ್ಪನ್ನು ಸರಿ ಮಾಡಿಕೊಳ್ಳಬಹುದು ಎನ್ನುವುದನ್ನು ಅರಿತು ಸಂದರ್ಶನ ಎದುರಿಸಬೇಕೆಂದರು.
ಉದ್ಯೋಗ ಮೇಳದಲ್ಲಿ ನೀಡಿದ ಪ್ರಮಾಣ ಪತ್ರ ಪಡೆದು ಆಯ್ಕೆಯಾದ ಕಂಪನಿಗೆ ವರದಿ ಮಾಡಿಕೊಳ್ಳಲು ಸಲಹೆ ನೀಡಿದರು.
ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಮಾತನಾಡಿ ಎಲ್ಲರಿಗೂ ಸರ್ಕಾರವೇ ಉದ್ಯೋಗ ನೀಡಲು ಆಗುವುದಿಲ್ಲ. ಜನರು ಸ್ವಯಂ ಬದುಕು ಕಟ್ಟಿಕೊಂಡು, ಉದ್ಯೋಗದಾತರಾಗಿ ಹೊರಹೊಮ್ಮಬೇಕು. ಶಿಕ್ಷಣ, ಜ್ಞಾನದ ಜೊತೆ ಕೌಶಲ್ಯತೆ ರೂಢಿಸಿಕೊಳ್ಳಬೇಕು. ಒಂದು ದೇಶದ ಪ್ರಗತಿ ಹಾಗೂ ಅಭಿವದ್ಧಿಗೆ ಯುವ ಶಕ್ತಿ ಪ್ರಮುಖವಾಗಿದ್ದು, ಉದ್ಯೋಗ ಮೇಳದಿಂದ ಯುವಕರಿಗೆ ಹೆಚ್ಚು ಲಾಭ ದೊರೆಯಲಿದೆ. ಇದರಿಂದ ಬದುಕು ಕಟ್ಟಿಕೊಂಡು ಯಶಸ್ಸು ಗಳಿಸಲು ಶ್ರಮಿಸಬೇಕು ಎಂದರು. ಯುವಕರು ದೇಶದ ಸಂಪತ್ತು. ಪ್ರತಿಯೊಬ್ಬರೂ ಯಾವುದಾದರೂ ಒಂದು ವೃತ್ತಿ ಮಾಡಬೇಕು. ಇದರಿಂದ ನಿಮ್ಮ ಭವಿಷ್ಯ ಉತ್ತಮವಾಗುತ್ತದೆ ಎಂದರು.
ಉದ್ಯೋಗದಾತ ಕಂಪನಿಗಳು ಕಾಲೇಜು ಆವರಣದಲ್ಲೇ ಮೇಳ ಆಯೋಜಿಸಿ, ಅಭ್ಯರ್ಥಿಗಳ ಸಂದರ್ಶನ ನಡೆಸಿ, ಅರ್ಹರಿಗೆ ಉದ್ಯೋಗ ನೀಡುತ್ತಿವೆ. ಇದು ವಿದ್ಯಾವಂತ ಬಡ ನಿರುದ್ಯೋಗಿಗಳಿಗೆ ಅನುಕೂಲವಾಗಿದೆ ಎಂದರು.
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯುವಕರು ಕೇವಲ ಪದವಿ ಪಡೆದರೆ ಸಾಲದು, ತಾಂತ್ರಿಕ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಬದ್ಧತೆ, ಸಮಯಪ್ರಜ್ಞೆ ಮತ್ತು ಆತ್ಮವಿಶ್ವಾಸವಿದ್ದರೆ ಯಾವುದೇ ಉದ್ಯೋಗವನ್ನು ಪಡೆಯಬಹುದು ಎಂದು ಯುವಜನತೆಗೆ ಕರೆ ನೀಡಿದರು. ತರಬೇತಿಯು ಹೆಚ್ಚು ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡುವಲ್ಲಿ ಯಶಸ್ವಿಯಾಗಿವೆ ಎಂದು ಅವರು ತಿಳಿಸಿದರು.
ಮೋನಿಕಾ, ಚಂದನಾ, ಸಿಂಚನಾ, ಸುಶೀಲಾ, ವಿನೂತ, ಸಾನಿಯಾ, ಶರತ್, ಅಶ್ವಿನಿ ಇನ್ನೂ ಕೆಲವು ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಆದೇಶ ಪ್ರತಿಯನ್ನು ನೀಡಿದರು.
ಮೇಳದ ಪ್ರಮುಖ ಅಂಕಿ-ಅAಶಗಳು: ಭಾಗವಹಿಸಿದ ಕಂಪನಿಗಳು: 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು, 61 ವಿಶೇಷ ಚೇತನ ಅಭ್ಯರ್ಥಿಗಳು ಒಳಗೊಂಡು 1944 ಉದ್ಯೋಗಾಕಾಂಕ್ಷಿಗಳು, ಆಯ್ಕೆ ಹಂತ ತಲುಪಿದವರು: 421 ಅಭ್ಯರ್ಥಿಗಳು, ಸ್ಥಳದಲ್ಲೇ ನೇಮಕಾತಿ: 421 ಅಭ್ಯರ್ಥಿಗಳಿಗೆ ಅಂತಿಮ ನೇಮಕಾತಿ ಆದೇಶ ಪಡೆದಿರುತ್ತಾರೆ. ಹಾಗೂ 555 ಅಭ್ಯರ್ಥಿಗಳು ಶಾರ್ಟ್ ಲಿಸ್ಟ್ ಆಗಿ 2ನೇ ಹಂತದ ಸಂದರ್ಶನ ಅರ್ಹತೆ ಪಡೆದಿರುತ್ತಾರೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ರಾವ್ ಪ್ರಾಸ್ತವಿಕ ನುಡಿಗಳಾನ್ನಾಡಿದರು.
ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಕೌಸರ್ ರೇಷ್ಮಾ, ಜಿಲ್ಲಾ ಗ್ಯಾರಂಟಿ ಯೋಜನೆಯ ಅಧ್ಯಕ್ಷರಾದ ಬಸವರಾಜ.ಟಿ.ಶಾಮನೂರು, ಉಪಾಧ್ಯಕ್ಷರಾದ ಮಂಜಣ್ಣ, ಪ್ರಾಂಶುಪಾಲರಾದ ಬಸವರಾಜ ತಹಶೀಲ್ದಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿಚಂದ್ರ, ಜಿ.ಪಂ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಫೆಬ್ರವರಿ ಮಾಹೆಗೆ ಪಡಿತರ ಹಂಚಿಕೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ-26ರ ಮಾಹೆಗೆ ಅನ್ವಯವಾಗುವಂತೆ ವಿವಿಧ ವರ್ಗದ ಪಡಿತರ ಚೀಟಿದಾರರಿಗೆ ಪಡಿತರ ಹಂಚಿಕೆ ಮಾಡಲಾಗಿದೆ.
ಅಂತ್ಯೋದಯ ಕಾರ್ಡದಾರರಿಗೆ 1 ರಿಂದ 3 ಸದಸ್ಯರಿರುವ ಕಾರ್ಡಿಗೆ 35 ಕೆ.ಜಿ ಅಕ್ಕಿ, 4 ಸದಸ್ಯರಿರುವ ಪ್ರತಿ ಕಾರ್ಡಿಗೆ 40 ಕೆ.ಜಿ ಅಕ್ಕಿ, 5 ಸದಸ್ಯರಿರುವ ಪ್ರತಿ ಕಾರ್ಡಿಗೆ 50 ಕೆ.ಜಿ ಅಕ್ಕಿ, 6 ಸದಸ್ಯರಿರುವ ಪ್ರತಿ ಕಾರ್ಡಿಗೆ 60 ಕೆ.ಜಿ ಅಕ್ಕಿ, 7 ಸದಸ್ಯರಿರುವ ಪ್ರತಿ ಕಾರ್ಡಿಗೆ 70 ಕೆ.ಜಿ ಅಕ್ಕಿ, 8 ಸದಸ್ಯರಿರುವ ಪ್ರತಿ ಕಾರ್ಡಿಗೆ 80 ಕೆ.ಜಿ ಅಕ್ಕಿ, 9 ಸದಸ್ಯರಿರುವ ಪ್ರತಿ ಕಾರ್ಡಿಗೆ 90 ಕೆ.ಜಿ, 10 ಸದಸ್ಯರಿರುವ ಪ್ರತಿ ಕಾರ್ಡಿಗೆ 100 ಕೆ.ಜಿ ಅಕ್ಕಿಯನ್ನು ನೀಡಲಾಗುವುದು.
ಪೋರ್ಟಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ಅಂತರ್ ರಾಜ್ಯ ಅಥವಾ ಜಿಲ್ಲೆಯ ಪಡಿತರ ಚೀಟಿಗಳಿಗೆ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತವಾಗಿ ಪಡೆಯಲು ಅವಕಾಶವಿರುತ್ತದೆ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಜನರಿಗೆ ಗುಣಮಟ್ಟದ ಪೌಷ್ಟಿಕ ಆಹಾರ ಒದಗಿಸುವುದು ಅಧಿಕಾರಿಗಳ ಕರ್ತವ್ಯ : ಡಾ.ಹೆಚ್.ಕೃಷ್ಣ
ಸುದ್ದಿದಿನ,ದಾವಣಗೆರೆ:ಆಹಾರ ಪಡೆಯುವುದು ಜನರ ಹಕ್ಕು, ಅದನ್ನು ಅನುಷ್ಠಾನಗೊಳಿಸುವುದು ನಮ್ಮ, ನಿಮ್ಮೆಲ್ಲರ ಕರ್ತವ್ಯ. ಅದಕ್ಕೆ ಪೂರಕವಾದ ವಾತಾವರಣವನ್ನು ನಿರ್ಮಿಸುವುದು ಸಹ ನಮ್ಮೆಲ್ಲರ ಜವಾಬ್ದಾರಿ. ಜನರಿಗೆ ಕೇವಲ ಆಹಾರ ಧಾನ್ಯಗಳನ್ನು ಒದಗಿಸುವುದು ಅಷ್ಟೇ ಸಾಕಾಗುವುದಿಲ್ಲ. ಜನರಿಗೆ ಸರಿಯಾದ ಪ್ರಮಾಣದ, ಗುಣಮಟ್ಟದ, ಸುರಕ್ಷಿತ ಮತ್ತು ಪೌಷ್ಟಿಕ ಆಹಾರವನ್ನು ಸಮುದಾಯದ ಸ್ಥಳೀಯ ಸಂಸ್ಕೃತಿಗೆ ಅನುಗುಣವಾಗಿ ಆಹಾರವನ್ನು ಒದಗಿಸಿದಾಗ ಮಾತ್ರ ಆಹಾರ ಭದ್ರತೆಯನ್ನು ಕೊಟ್ಟಿದ್ದೇವೆ ಎಂದು ಹೇಳಲು ಸಾಧ್ಯವಾಗುತ್ತದೆ ಎಂದು ಆಹಾರ ಭದ್ರತಾ ಆಯೋಗದ ಅಧ್ಯಕ್ಷರಾದ ಡಾ.ಹೆಚ್.ಕೃಷ್ಣ ಅವರು ತಿಳಿಸಿದರು.
ಅವರು ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ವತಿಯಿಂದ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013ರ ಅನುಷ್ಠಾನದ ಮೇಲ್ವಿಚಾರಣೆ ಮಾಡುವ ಜವಾಬ್ದಾರಿ ನಮ್ಮ ರಾಜ್ಯ ಆಹಾರ ಆಯೋಗಕ್ಕೆ ಇದೆ. ಈ ಜವಾಬ್ದಾರಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಬೇಕಾದರೆ, ಇಲ್ಲಿ ಹಾಜರಿರುವ ಎಲ್ಲಾ ಇಲಾಖೆಗಳು ಸಮನ್ವಯ ಮತ್ತು ಸಹಕಾರದ ಮನೋಭಾವದಿಂದ ಕಾರ್ಯನಿರ್ವಹಿಸಬೇಕು. ವಿವಿಧ ಇಲಾಖೆಗಳ ನಡುವೆ ಈ ರೀತಿಯ ಸಮನ್ವಯವನ್ನು ಸಾಧಿಸಲು ಆಹಾರ ಭದ್ರತಾ ಕಾಯ್ದೆಯ ಜಾರಿಯಲ್ಲಿ ಕುಂದುಕೊರತೆ ನಿವಾರಣಾ ಅಧಿಕಾರಿಗಳಾದ ಮಾನ್ಯ ಜಿಲ್ಲಾಧಿಕಾರಿಗಳು ಮತ್ತು ಅವರ ಕಚೇರಿ ಪ್ರಮುಖವಾದ ಪಾತ್ರವನ್ನು ವಹಿಸುತ್ತದೆ.
ಸುರಕ್ಷಿತ ಕುಡಿಯುವ ನೀರು, ಸ್ವಚ್ಛತೆ, ಆರೋಗ್ಯ ಸೇವೆಗಳ ಲಭ್ಯತೆ, ಗುಣಮಟ್ಟದ ಶಿಕ್ಷಣ ಹಾಗೂ ಉದ್ಯೋಗಾವಕಾಶಗಳು ಪ್ರಮುಖವಾದಂತಹ ವಿಷಯಗಳು. ಇದರ ಜೊತೆಗೆ ಸಾಮಾಜಿಕ, ದೈಹಿಕ ಹಾಗೂ ಆರ್ಥಿಕ ದುರ್ಬಲತೆಗಳ ಬಗ್ಗೆ ಸ್ಪಷ್ಟವಾದ ಗಮನಹರಿಸುವುದು ಅತ್ಯಂತ ಅವಶ್ಯಕ. ಲಿಂಗ, ಜಾತಿ, ವರ್ಗ, ಉದ್ಯೋಗದ ಆಧಾರದ ಅಸಮಾನತೆಗಳು ಮತ್ತು ಬಡತನ ಈ ಸವಾಲುಗಳನ್ನು ಯಾವಾಗಲೂ ನಮ್ಮ ದೇಶವನ್ನ, ರಾಜ್ಯದಲ್ಲಿ ಇರುವಂತಹ ಸಮಸ್ಯೆಗಳು. ಆದ್ದರಿಂದ ರಾಜ್ಯದಲ್ಲಿ ಆಹಾರ ಅಭಾವ ಮತ್ತು ಅಪೌಷ್ಟಿಕತೆಯನ್ನು ನಿರ್ಮೂಲನೆಗೊಳಿಸಬೇಕಾದರೆ ನಾವು, ನೀವೆಲ್ಲರೂ ಒಟ್ಟಾಗಿ ಸೇರಿ ಕಾರ್ಯ ನಿರ್ವಹಿಸುವ ಅಗತ್ಯವಿದೆ ಎಂದು ತಿಳಿಸಿದರು.
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013ರ ಮತ್ತೊಂದು ಪ್ರಮುಖ ಅಂಶವೆಂದರೆ ಜೀವನ ಚಕ್ರ ದೃಷ್ಟಿಕೋನ. ಗರ್ಭಧಾರಣೆಯಿಂದ ಆರಂಭಿಸಿ ಜನನ, ಬಾಲ್ಯ, ಯೌವ್ವನ, ಪ್ರೌಢಾವಸ್ಥೆ ಹಾಗೂ ವೃದ್ಧಾಪ್ಯದವರೆಗೆ ಮಾನವನ ಜೀವನದ ಎಲ್ಲಾ ಹಂತಗಳ ಅಗತ್ಯಗಳನ್ನು ಈ ಕಾಯ್ದೆ ಗಮನದಲ್ಲಿಟ್ಟುಕೊಂಡಿದೆ. ಒಂದು ಹಕ್ಕು ಆಧಾರಿತ ಕಾನೂನು. ಅಂದರೆ ಐ.ಸಿ.ಡಿ.ಎಸ್ (ICDS), ಅಂಗನವಾಡಿ, ಮಧ್ಯಾಹ್ನದ ಬಿಸಿಯೂಟ ಯೋಜನೆ, ಸಾರ್ವಜನಿಕ ವಿತರಣಾ ವ್ಯವಸ್ಥೆ, ಟಿ.ಪಿ.ಡಿ.ಎಸ್ (TPDS) ಮತ್ತು ಮಾತೃತ್ವದ ಹಕ್ಕುಗಳು. ಈ ನಾಲ್ಕು ಯೋಜನೆಗಳ ಮೂಲಕ ದೊರೆಯುವ ಸೇವೆಗಳು ಈಗ ಕಾನೂನಾತ್ಮಕವಾಗಿ ಬೇಡಿಕೆ ಇಡಬಹುದಾದ ಹಕ್ಕುಗಳಾಗಿವೆ. ಆದ್ದರಿಂದ ಅನುಷ್ಠಾನದಲ್ಲಿ ಜನರನ್ನು ಕೇಂದ್ರಬಿಂದುವಾಗಿ ಇಟ್ಟುಕೊಂಡು ವ್ಯವಸ್ಥೆಯನ್ನು ಜವಾಬ್ದಾರಿಯುತ, ಪಾರದರ್ಶಕ ಹಾಗೂ ಸಮಾನತೆಯ ತತ್ವದ ಮೇಲೆ ಕಾರ್ಯ ನಿರ್ವಹಿಸಬೇಕು, ಅನ್ನೋದು ನನ್ನ ನಂಬಿಕೆ ಎಂದರು.
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ, ಆಹಾರ ಸುರಕ್ಷತೆ ಹಾಗೂ ಅದರೊಂದಿಗೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವ ಅಪಾರ ಸಾಮರ್ಥ್ಯವನ್ನು ಹೊಂದಿದ್ದೇವೆ ಎಂದು ಭಾವಿಸಿದ್ದೇನೆ. ಎಲ್ಲರೂ ಒಟ್ಟಾಗಿ ಬದ್ಧತೆಯಿಂದ ಹಕ್ಕು ಆಧಾರಿತ ದೃಷ್ಟಿಕೋನದೊಂದಿಗೆ ಈ ಕಾಯ್ದೆಯನ್ನು ಅದರ ನಿಜವಾದ ಅರ್ಥದಲ್ಲಿ ಜಾರಿಗೆ ತಂದರೆ ಆಹಾರದ ಹಕ್ಕನ್ನು ಸಹಕಾರಗೊಳಿಸುವಲ್ಲಿ ಕರ್ನಾಟಕ ಮುಂಚೂಣಿ ರಾಜ್ಯವಾಗುವುದು. ಭಾರತದಲ್ಲಿ ಆಹಾರ ಭದ್ರತೆ, ಅದು ಹಕ್ಕು ಎಂಬ ತತ್ವದ ಮೇಲೆ ಆಧಾರಿತವಾಗಿದೆ. ಈ ಹಕ್ಕಿಗೆ ಕಾನೂನಾತ್ಮಕ ಬಲ ನೀಡಿದ ಮಹತ್ವದ ಕಾಯ್ದೆ ಈ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ,
ಕೇಂದ್ರ ಅಥವಾ ರಾಜ್ಯ ಸರ್ಕಾರದ ಯೋಜನೆಗಳು ಗ್ರಾಮ ಪಂಚಾಯತಿ ಮಟ್ಟದಲ್ಲಿ, ತಾಲೂಕು ಮಟ್ಟದಲ್ಲಿ, ಜಿಲ್ಲಾ ಮಟ್ಟದಲ್ಲಿ ಸರಿಯಾಗಿ ಜಾರಿಗೆ ಬರಬೇಕು. ಅದಕ್ಕೆ ಅಧಿಕಾರಿಗಳು ಆಹಾರದ ಹಕ್ಕುಗಳ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು. ಅವರ ಸಮಸ್ಯೆಗಳನ್ನ ಕೇಳಬೇಕು. ದೂರುಗಳಿದ್ದರೆ ಅದನ್ನ ಸರಿಮಾಡಬೇಕು ಎಂದರು.
ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ಮಾತನಾಡಿ ತೂಕದಲ್ಲಿನ ಮೋಸವನ್ನು ತಡೆಯಲು ಮತ್ತು ಪಾರದರ್ಶಕತೆಯನ್ನು ತರಲು, ಅಂಗಡಿಗಳಲ್ಲಿ ‘ಜಿಯೋ ಫೆನ್ಸಿಂಗ್’ (Geo-fencing) ತಂತ್ರಜ್ಞಾನವನ್ನು ಅಳವಡಿಸುವುದು ಅವಶ್ಯಕ, ಇದು ಅಂಗಡಿಯ 10 ಮೀಟರ್ ಒಳಗೆ ಮಾತ್ರ ವ್ಯವಹಾರ ನಡೆಯುವಂತೆ ಮಾಡುತ್ತದೆ, ಈವರೆಗೆ ತೂಕದಲ್ಲಿ ವ್ಯತ್ಯಾಸ ಮತ್ತು ಇತರ ಅಕ್ರಮಗಳಿಗಾಗಿ ಸುಮಾರು 23 ಎಫ್ಐಆರ್ಗಳನ್ನು ದಾಖಲಿಸಲಾಗಿದೆ. ನ್ಯಾಯಬೆಲೆ ಅಂಗಡಿಗಳನ್ನು ಅಧಿಕಾರಿಗಳ ತಂಡೊಂದಿಗೆ ಖುದ್ದಾಗಿ ಭೇಟಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ. ಒಟ್ಟಾರೆಯಾಗಿ, ನ್ಯಾಯಬೆಲೆ ಅಂಗಡಿಗಳಲ್ಲಿ ಪಾರದರ್ಶಕತೆಯನ್ನು ಕಾಪಾಡಿಕೊಳ್ಳುವುದು ಮತ್ತು ಬಡ ಜನರಿಗೆ ಸಿಗಬೇಕಾದ ಪಡಿತರ ಸರಿಯಾದ ತೂಕದಲ್ಲಿ ಸಿಗುವಂತೆ ಮಾಡುವುದು ಇದರ ಉದ್ದೇಶವಾಗಿದೆ ಎಂದು ಸಭೆಗೆ ತಿಳಿಸಿದರು.
ಆಹಾರ ಭದ್ರತಾ ಆಯೋಗದ ಸದಸ್ಯರಾದ ಲಿಂಗರಾಜ್ ಕೋಟೆ , ಸುಮಂತ್ ರಾವ್, ಮಾರುತಿ ದೊಡ್ಡಲಿಂಗಣ್ಣ, ಕೆ.ಎಸ್. ವಿಜಯಲಕ್ಷ್ಮಿ, ರೋಹಿಣಿ ಪ್ರಿಯಾ, ಸದಸ್ಯ ಕಾರ್ಯದರ್ಶಿ ಮತ್ತು ಅಪರ ನಿರ್ದೇಶಕರಾದ ಸುಜಾತಾ ಹೊಸಮನಿ , ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಮಧುಸೂಧನ್, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


