Connect with us

ದಿನದ ಸುದ್ದಿ

ನಮ್ಮ‌ ಪೂರ್ವಿಕ ಶಿವನೂ ; ಅವರ ಡುಬಾಕು ಸನಾತನವೂ..

Published

on

  • ಹರ್ಷಕುಮಾರ್ ಕುಗ್ವೆ

ಲಿಂಗವು ದೇವರಲ್ಲ ಶಿವನು ದೇವರಲ್ಲ
ಶಕ್ತಿಯೂ ದೇವರಲ್ಲ. ಮನುಷ್ಯನ ಕಲ್ಪನೆಯ ಆಳವನ್ನು ಮೀರಿದ ಯಾವ ದೇವರೂ ಇಲ್ಲ. ಅಸಲಿಗೆ ಇಡೀ ಜಗತ್ತನ್ನು ನಡೆಸುವ ದೇವರೆಂಬುದೇ ಇಲ್ಲ.

ಶಿವನು ನಮ್ಮ ಪೂರ್ವಿಕ, ಗೌರಿ ಅತವಾ ಶಕ್ತಿ ನಮ್ಮ ಪೂರ್ವಿಕಳು. ಗಂಗೆ ನಮ್ಮ ಬದುಕು. ಶಿವನ ಕೊರಳಿನ ನಾಗ ನಮ್ಮ ಕುಲ. ಲಿಂಗ ಫಲವಂತಿಕೆಯ ಸಂಕೇತವೂ ಹೌದು, ಶಿವ ಶಕ್ತಿಯರ ಸಮಾಗಮದ ಸಂಕೇತವೂ ಹೌದು. ನಮ್ಮ ಜನರಿಗೆ ಸಂಕೇತಗಳು ಶಕ್ತಿಯಾಗಿದ್ದವು, ಪ್ರೇರಣೆಯಾಗಿದ್ದವು. ಡೊಳ್ಳು ಹೊಡೆದು ಕೇಕೆ ಹಾಕಿದಾಗ ಮಳೆ ಬಂದರೆ, ನಮ್ಮ ಡೊಳ್ಳಿನ ಸದ್ದಿನ ಶಕ್ತಿಯಿಂದಲೇ, ನಮ್ಮ ಕೇಕೆಯಿಂದಲೇ ಮಳೆ ಬಂತು ಎಂದು ನಂಬಿದರು. ಇದನ್ನು primitive magic ಪರಿಕಲ್ಪನೆ ಎನ್ನಲಾಗಿದೆ.‌ ನಮ್ಮ ಬಳ್ಳಾರಿಯ ಸಂಗನಕಲ್ಲಿನಲ್ಲಿ 3000 ವರ್ಷಗಳ ಹಿಂದೆ ಕಲ್ಲು ಬಂಡೆಗಳ ಮೇಲೆ ಕೆತ್ತಿದ ಹೋರಿ ಮತ್ತು ಉದ್ದ ಕೊಂಬಿನ ಕೆತ್ತನೆಗಳು ಸಹ ಇಂತಹ ಒಂದು ಆದಿಮ ಮಾಂತ್ರಿಕ ಶಕ್ತಿಯ ಆಚರಣೆಯಾಗಿದೆ.

ನಂಬಿಕೆಗಳನ್ನು ಸಂಸ್ಕೃತಿಯಾಗಿ, ಪರಂಪರೆಯಾಗಿ ಗ್ರಹಿಸಬೇಕೇ ಹೊರತು ದೇವರಾಗಿ ಅಲ್ಲ. ದೇವ ಎಂಬ ಕಲ್ಪನೆಯೇ ದ್ರಾವಿಡರಲ್ಲಿ ಇರಲಿಲ್ಲ. 50 ಸಾವಿರ ವರ್ಷಗಳಿಂದ ಬಂದ ಲಿಂಗ- ಯೋನಿ ಪೂಜೆ, ಗೌರಿ ಪೂಜೆ, 9,000 ವರ್ಷಗಳಿಂದ ಬಂದ ಬೂಮ್ತಾಯಿ ಪೂಜೆ, ಅರಳಿ ಮರದ ಪೂಜೆ, ಐದು ಸಾವಿರ ವರ್ಷಗಳಿಂದ ಬಂದ ಶಿವನ ಪೂಜೆ, ಗಣಪತಿ ಪೂಜೆ, ನಾಗನ ಪೂಜೆ, 4000 ವರ್ಷಗಳಿಂದ ಬಂದ ಗತಿಸಿದ ಹಿರೀಕರ ಪೂಜೆ, ಇದರ ಮುಂದುವರಿಕೆಯಾಗಿಯೇ 2600 ವರ್ಷಗಳ ಹಿಂದೆ ಬುದ್ದ ಗುರುವು ತೀರಿದ ಬಳಿಕ ಅವನ ಅಸ್ತಿಯನ್ನು ಇಟ್ಟ ಸ್ತೂಪಗಳನ್ನು ಪೂಜಿಸಿದೆವು, ದೂಪ ಹಾಕಿದೆವು..‌. ಇದುವೇ ಈ ನೆಲದ ಪೂಜನ ಸಂಸ್ಕತಿಯಾಗಿತ್ತು.

‘ದೇವ’ ಮತ್ತು ಅಸುರ ಇಬ್ಬರೂ ಬಂದಿದ್ದು ಮಧ್ಯ ಏಷ್ಯಾದಿಂದ ಹೊರಟಿದ್ದ ಆರ್ಯರಿಂದಲೇ. ಅವರಿಗೆ ಪೂಜೆ ಗೊತ್ತಿರಲಿಲ್ಲ. ಯಜ್ಞ ಗೊತ್ತಿತ್ತು, ಹೋಮ ಗೊತ್ತಿತ್ತು. ‘ದೇವ’ ಅತವಾ “ದ-ಏವ” ಕೂಡಾ ಮೂಲದಲ್ಲಿ ಆರ್ಯರ ಪೂರ್ವಿಕ ಕುಲ ನಾಯಕರೇ ಆಗಿದ್ದಾರು.‌.. ಹೀಗಾಗಿಯೇ ಆರ್ಯ ವೈದಿಕರ ದೇವ ಎಂದರೆ ಅವರ ದಾಯಾದಿಗಳಾಗಿದ್ದ ಪಾರ್ಸಿಯನ್ (ಜೊರಾಸ್ಟ್ರಿಯನ್) ಆರ್ಯ ಅವೆಸ್ತನ್ನರಿಗೆ ಕೆಡುಕಿನ ಸಂಕೇತ‌ವಾಗಿತ್ತು. ಹಾಗೇ ಆರ್ಯ ವೈದಿಕರು ಕೆಡುಕು ಎಂದ ಅಸುರ (ಅಹುರ) ಆರ್ಯ ಅವೆಸ್ತನ್ನರ ಪಾಲಿಗೆ “ನಾಯಕ”ನಾಗಿದ್ದ. ಅವರನ್ನು ಅಹುರ ಮಜ್ದಾ ಎಂದು ಕರೆದು ಆರಾದಿಸಿದರು.

ಭಾರತಕ್ಕೆ ಪ್ರವೇಶಿಸಿದ ಬಳಿಕ ಆರ್ಯ ವೈದಿಕರಿಗೆ ಈ ನೆಲದ ಮೊದಲ ನಿವಾಸಿಗಳ ಮೇಲೆ ಯಜಮಾನಿಕೆ ಸ್ತಾಪಿಸಬೇಕಿತ್ತು. ಅದಕ್ಕಾಗಿ ನಮ್ಮಿಂದ ಪೂಜೆಗೊಳ್ಳುತ್ತಿದ್ದ ಪೂರ್ವಿಕರನ್ನು ತಮ್ಮ “ದೇವರು” ಮಾಡಿದರು. ಆ ದೇವರ ಪೂಜೆಗೆ ಅವರೇ ನಿಂತರು. ತಮ್ಮ ಜುಟ್ಟು ಬಿಟ್ಟುಕೊಂಡು ನಮ್ಮ ಜುಟ್ಟು ಹಿಡಿದರು. ನಾವು ಪೂರ್ವಿಕರನ್ನು ಬಿಟ್ಟು ಕೊಟ್ಟು, ಅವರ ಕೈಯಲ್ಲಿ ದೇವರುಗಳ ಪೂಜೆ ನಡೆಯುವಾಗ ನಮ್ಮ ಪೂರ್ವಿಕರಿಗೆ ಗೊತ್ತೇ ಇರದಿದ್ದ ವೇದ ಮಂತ್ರಗಳನ್ನ ಕೇಳಿ ಪುನೀತರಾದೆವು. ಈ ಮಂತ್ರ ಭಾಷೆಯೇ ದೇವರಿಗೆ ಅರ್ಥವಾಗುವುದು ಎಂದು ಪುಂಗಿದ್ದಕ್ಕೆ ತಲೆಯಾಡಿಸಿ ಕೈಮುಗಿದು ಗರ್ಭಗುಡಿಯ ಹೊರಗೆ ಸಾಲಿನಲ್ಲಿ ನಿಂತೆವು.‌ ಮುಂದಿನ 2000 ವರ್ಷಗಳ ಕಾಲ ಗುಲಾಮರಾದೆವು.‌ ಪುರಾಣಗಳನ್ನು ಕೇಳಿದೆವು, ನಂಬಿದೆವು ಮತಿಗೆಟ್ಟೆವು, ಗತಿಗೆಟ್ಟೆವು.

ಇನ್ನೂ ಉಳಿದಿರುವುದೇನು?
ನಾವು ಶಿವನ ವಕ್ಕಲು, ಗೌರಿ- ಗಂಗೆಯರ ಒಕ್ಕಲು. ಅವರು ಇಂದ್ರ ಅಗ್ನಿಯರ ವಕ್ಕಲಾಗಿದ್ದವರು ತಮ್ಮ ದೇವರಿಗೆ ಕಿಮ್ಮತ್ತಿಲ್ಲ ಎಂದರಿತು ಅವರನ್ನೇ ಬಿಟ್ಟರು. ಈಗ ಹೇಳುತ್ತಾರೆ ನಾವೇ ಸನಾತನರು ಎಂದು! ಅವರ ಡುಬಾಕು ಸನಾತನದಲ್ಲಿ ನಮ್ಮತನ ಕಳೆದುಕೊಂಡ “ಶೂದ್ರ ಮುಂಡೇಮಕ್ಕಳಾಗಿ”, ಅವರಿಗಾಗಿ ಬಾಳು ಬದುಕು ಹಾಳುಮಾಡಿಕೊಂಡು, ಅವರ ಹೋಮ ಹವನ ಮಾಡಿಸಿ, ನಮ್ಮ ಉಳಿಕೆ ಕಾಸು ಕಳೆದುಕೊಂಡು, ಗೌರವ ಗನತೆ ಕಳೆದುಕೊಳ್ಳುವುದೇ ಇವತ್ತಿನ ಸನಾತನ!

– ಹರ್ಷಕುಮಾರ್ ಕುಗ್ವೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ ನಡೆಸಿದರು.

ನಗರದ ಬಾರ್ ಲೈನ್ ದರ್ಗಕ್ಕೆ ತೆರಳಿ ಚಾದರ ಅರ್ಪಿಸಿದ ಸಮರ್ಥ ಶಾಮನೂರು ಅವರಿಗೆ ಮುಸ್ಲಿಂ ಸಮಾಜದ ಬಾಂಧವರು ಆತ್ಮೀಯವಾಗಿ ಸನ್ಮಾನಿಸಿದರು. ಬಳಿಕ ಅಲ್ಲಿಂದ ಪ್ರಚಾರವನ್ನು ಆರಂಭಿಸಿದ ಅವರು ಎಂ.ಬಿ ಕೇರಿ, ಮಟನ್ ಮಾರ್ಕೇಟ್, ಗಡಿಯಾರ ಕಂಬ, ಸ್ವಾಗೇರ್ ಪೇಟೆ, ಹೊಂಡದ ರಸ್ತೆ, ಕಾಯಿಪೇಟೆಯ ಮನೆ ಮನೆಗೆ ತೆರಳಿ ಮತಯಾಚಿಸಿದರು.

ಕಾಂಗ್ರೆಸ್ ಪಕ್ಷದ ಮುಖಂಡರಾದ ನರಸಿಂಹಪ್ಪ, ರವಿಕುಮಾರ್, ಕಾಶಿನಾಥ್ ಅವರ ಮನೆಗೆ ಅಭ್ಯರ್ಥಿ ಸಮರ್ಥ ಶಾಮನುರು ಅವರು ಭೇಟಿ ನೀಡಿದಾಕ್ಷಣ ಕುಟುಂಬಸ್ಥರು ದಿವಂಗತರಾದ ಡಾ.ಶಾಮನೂರು ಶಿವಶಂಕರಪ್ಪ ಅವರನ್ನು ನೆನೆದು ಭಾವುಕರಾದರು. ಶಾಮನೂರು ಸಮರ್ಥ ಅವರಿಗೆ ದಕ್ಷಿಣ ಕ್ಷೇತ್ರದಲ್ಲಿ ಪ್ರಚಂಡ ಬಹುಮತವನ್ನು ನೀಡಿ ಗೆಲ್ಲಿಸುತ್ತೇವೆ ಎಂದು ಮತದಾರರು ಅಭಿಪ್ರಾಯ ವ್ಯಕ್ತಪಡಿಸಿದರು.

ಸ್ಥಳೀಯ ಮುಖಂಡರಾದ ಚಂದ್ರ ಶೇಖರ್, ಸೋಗಿ ಶಾಂತಕುಮಾರ್, ಪ್ರವೀಣ್ ರಾವ್, ಬಕ್ಕೇಶ್, ಪರಮೇಶ್, ಜಯರಾಜ್, ಹನುಮಂತ್, ರಾಘವೇಂದ್ರ, ಭೀಮಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ

Published

on

ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ‌ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು ಸರ್ಕಾರದ ಕೊಂಡಿಯಾಗಿ ಸೇವೆ ಮಾಡುತ್ತಿರುವ ಪತ್ರಿಕೆಗಳು ಮುಚ್ಚುತ್ತವೆ‌. ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ಮಾರಕವಾಗುವ ನಿಯಮಗಳನ್ನು ಅಳವಡಿಸದೇ ಪತ್ರಿಕೆಗಳ ಏಳಿಗೆಗೆ ಪೂರಕವಾದ ಅಂಶಗಳನ್ನು ಸೇರಿಸಿ ಕರ್ನಾಟಕ ಜಾಹೀರಾತು ನೀತಿಯನ್ನು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.

ಸಂಘಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಹೀರಾತು ನೀತಿ ಪರಿಶೀಲಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಆರ್ ಕುಣೆಬೆಳಕೆರೆ, ಖಜಾಂಜಿ ಶಿವಮೂರ್ತಿ ಟಿ.ಜಿ , ರಾಜ್ಯ ಸಂಘದ ನಾಮನಿರ್ದೇಶನ ಸದಸ್ಯ ಕೆ.ಜೈಮುನಿ ಮತ್ತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕರಾದ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಖಜಾಂಚಿ ಜೆ.ಎಸ್.ವೀರೇಶ್ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ ಬಡದಾಳ್ , ಹಿರಿಯ ಪತ್ರಕರ್ತರಾದ ಕೆ.ಏಕಾಂತಮ್ಮ, ಬಿ.ಎನ್.ಮಲ್ಲೇಶ್, ಮಲ್ಲಿಕಾರ್ಜುನ ಕಬ್ಬೂರು, ಆರ್.ಎಸ್.ತಿಪ್ಪೇಸ್ವಾಮಿ, ಕೊಟ್ರೇಶ್ ಅಣಬೂರುಮಠ, ನಿಂಗಪ್ಪ, ಗೋವಿಂದ ರಾಜು, ಫಕೃದ್ದೀನ್, ಆರ್.ರವಿ,ಬಿ.ವಾಸುದೇವ, ರಾಘವೇಂದ್ರ ರಾವ್, ವೇದಮೂರ್ತಿ,ನಿಂಗಪ್ಪ, ಪರಶುರಾಮ, ನಂದಕುಮಾರ್ ಮುಂತಾದವರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending