ನೆಲದನಿ
ನೆಲನುಡಿಗೆ ದನಿಯಾದ ಡಾ. ಎಂ.ಜಿ ಈಶ್ವರಪ್ಪ ಅವರ ಸಾಹಿತ್ಯ ಮತ್ತು ಕಲಾ ಬದುಕಿನ ಸುತ್ತ
ಭಾರತೀಯ ಸಂಸ್ಕøತಿಯು ನೆಲಮೂಲ ಬದುಕಿನೊಂದಿಗೆ ಅನುಸಂಧಾನಗೊಂಡು, ನೆಲದ ಸೊಗಡು ಮತ್ತು ಕಸುವನ್ನು ತನ್ನ ಜೀವಾಳವಾಗಿಸಿಕೊಂಡಿದೆ. ಇಂತಹ ನೆಲಮೂಲ ಸಂಸ್ಕøತಿಯ ಜೀವಾಳದಂತಿರುವ ಜನಪದ ಸಾಹಿತ್ಯಕ್ಕೆ ಕಸುವು ನೀಡಿ, ತಮ್ಮ ಬದುಕಿನ ಭಾಗವೆಂಬಂತೆ ಕಾಪಾಡಿಕೊಂಡು ಬಂದವರು ಈ ನಾಡಿನ ಮೂಲನಿವಾಸಿಗಳು. ಜನಪದ ಸಾಹಿತ್ಯವು ಸಾಮಾನ್ಯ ಜನತೆಯ ಬದುಕಿನಲ್ಲಿ ಮಹತ್ತರವಾದ ಸ್ಥಾನಮಾನವನ್ನು ಪಡೆದುಕೊಂಡಿದೆ. ನಮ್ಮ ಜನಪದರು ಅಕ್ಷರವಂಚಿತರಾದರೂ ಶಿಕ್ಷಿತವರ್ಗದ ಕಟ್ಟುಪಾಡುಗಳಿಗೆ ಪ್ರತಿರೋಧ ಒಡ್ಡುವ ಮೂಲಕವಾಗಿ ತಮ್ಮದೆ ಆದ ಪರ್ಯಾಯ ಬದುಕನ್ನು ರೂಪಿಸಿಕೊಂಡು, ತಮ್ಮ ವಿಶ್ವಭ್ರಾತೃತ್ವದ ಮೌಲ್ಯಗಳನ್ನು ಜನ ಸಾಹಿತ್ಯದ ವಿವಿಧ ಪ್ರಕಾರಗಳ ಮೂಲಕವಾಗಿ ಪಸರಿಸಿಕೊಂಡು ಬಂದಿದ್ದಾರೆ. ಇಂದಿನ ಜಾಗತೀಕರಣ, ಔದ್ಯೋಗಿಕರಣ ಹಾಗೂ ಉದಾರೀಕರಣದಂತಹ ಬಿಕ್ಕಟ್ಟಿನ ಸಂದರ್ಭದಲ್ಲಿ ಈ ಎಲ್ಲಾ ಸಮಸ್ಯೆಗಳಿಗೂ ಸೂಕ್ತ ಪರಿಹಾರ ಇಲ್ಲಿನ ಜನ ಸಾಹಿತ್ಯದಲ್ಲಿದೆ. ಇಂತಹ ಜನ ಅಥವಾ ಜನಪದ ಸಾಹಿತ್ಯವನ್ನು ಯಾವುದೇ ಅಕಾಡೆಮಿಕ್ ಶಿಸ್ತಿಗೆ ಒಳಪಡದೆ ನಮ್ಮ ಜನಪದರು ಕಾಪಾಡಿಕೊಂಡು ಬಂದಿದ್ದಾರೆ. ಆದರೆ ಇತ್ತೀಚಿನ ದಿನಮಾನಗಳಲ್ಲಿ ಶಿಷ್ಟ ಸಾಹಿತ್ಯದ ಎದುರು ಸ್ಪರ್ಧೆಗೊಳ್ಳದೆ ಮೂಲೆಗುಂಪಾಗಿದ್ದ ಜನಪದ ಸಾಹಿತ್ಯವನ್ನು ಸಮಾಜದ ಮುನ್ನೆಲೆಗೆ ತಂದು, ಅದರ ಆಳ ಅಗಲ ಹಾಗೂ ಕಸುವನ್ನು ಗುರುತಿಸುವ ನೆಲೆಯಲ್ಲಿ ನಮ್ಮ ನೆಲದ ವಿದ್ವಾಂಸರು ಅವಿರತ ಶ್ರಮಿಸಿದ್ದಾರೆ.
ಇಂತಹ ಅಥವಾ ಜನ ಸಾಹಿತ್ಯಕ್ಕೆ ದನಿಯಾದವರಲ್ಲಿ ಡಾ.ಎಂ.ಜಿ ಈಶ್ವರಪ್ಪನವರು ಒಬ್ಬರಾಗಿದ್ದಾರೆ.
ಶೀಯುತ ಎಂ.ಜಿ ಈಶ್ವರಪ್ಪನವರು ಶಿವಮೊಗ್ಗ ಜಿಲ್ಲೆಯ ಹಾಡೊನಹಳ್ಳಿ ಗ್ರಾಮದಲ್ಲಿ ಶ್ರೀಮತಿ ಗಿರಿಜಮ್ಮ ಶ್ರೀ ರುದ್ರಪ್ಪ ದಂಪತಿಗಳ ಪುತ್ರರಾಗಿ ಜನಿಸಿದರು. ಶ್ರೀಯುತರ ತಂದೆಯವರಾದ ರುದ್ರಪ್ಪನವರು ಕೃಷಿ ಮೂಲ ಕುಟುಂಬದವರಾಗಿದ್ದು, ಇವರ ಪ್ರೇರಣೆಯು ಎಂ.ಜಿ ಈಶ್ವರಪ್ಪನವರ ಮೇಲೆ ಸಾಕಷ್ಟು ಪ್ರಭಾವ ಬೀರಿತು. ಬಾಲ್ಯದ ದಿನಗಳಿಂದಲೂ ಕೃಷಿ ಚಟುವಟಿಕೆಗಳನ್ನು ಹತ್ತಿರದಿಂದ ನೋಡಿದ ಇವರು, ಈ ಕೃಷಿ ಕಾರ್ಯಗಳಲ್ಲಿ ವಿಶೇಷವಾದ ಆಸಕ್ತಿಯನ್ನು ಹೊಂದಿದ್ದರು. ಶಾಲಾ ಶಿಕ್ಷಣದಲ್ಲಿನ ಆಸಕ್ತಿಯೊಂದಿಗೆ, ಬಿಡುವಿನ ವೇಳೆಯಲ್ಲಿ ಕೃಷಿಯ ವಿವಿಧ ಕಾರ್ಯಗಳಾದ ಕುಂಟೆ ಹೊಡೆಯುವ, ಜಾನುವಾರುಗಳನ್ನು ಸಾಕುವ ಕಾಯಕದಲ್ಲಿ ತಲ್ಲಿನರಾಗಿರುತ್ತಿದ್ದರು. ಇವರು ಪದವಿ ಶಿಕ್ಷಣವನ್ನು ವಿಜ್ಞಾನ ವಿಷಯದಲ್ಲಿ ಅಧ್ಯಯನ ಮಾಡಿ, ಸ್ನಾತಕೋತ್ತರ ಪದವಿಯನ್ನು ಮೈಸೂರು ವಿಶ್ವವಿದ್ಯಾಲಯದಿಂದ ಕನ್ನಡ ವಿಷಯದಲ್ಲಿ ಪೂರೈಸಿದರು. ಈ ಅವಧಿಯಲ್ಲಿ ಇವರಿಗೆ ಕರಗತವಾಗಿದ್ದ ಜಾನಪದ ಹಾಗೂ ಕೃಷಿ ಜ್ಞಾನವನ್ನು ಸೂಕ್ಷ್ಮವಾಗಿ ಗಮನಿಸಿದ ಹೆಸರಾಂತ ಜಾನಪದ ವಿದ್ವಾಂಸರಾದ ಜಿ.ಶಂ.ಪರಮಶಿವಯ್ಯನವರು ‘ವ್ಯವಸಾಯ ಜಾನಪದ’ ಎಂಬ ವಿಷಯದ ಕುರಿತಾಗಿ ಪಿಎಚ್.ಡಿ ಅಧ್ಯಯನ ಕೈಗೊಳ್ಳುವಂತೆ ಮಾರ್ಗದರ್ಶನ ನೀಡಿದರು. ಇವರ ಒತ್ತಾಸೆ ಹಾಗೂ ತನ್ನಲ್ಲಿ ಅಂತರ್ಗತವಾಗಿದ್ದ ಕೃಷಿ ಮತ್ತು ಜಾನಪದ ವಿಷಯವನ್ನು ಕೇಂದ್ರವಾಗಿಟ್ಟುಕೊಂಡು ಅಧ್ಯಯನ ನಡೆಸಿದರು. ಜಾನಪದ ಲೋಕದ ಕೃಷಿಯ ಮಹತ್ತು ಹಾಗೂ ಅದರ ಜೀವಪರ ಧೋರಣೆಗಳನ್ನು ಗುರುತಿಸುವ ಮೂಲಕ ಜಾನಪದ ಕ್ಷೇತ್ರಕ್ಕೆ ತಮ್ಮದೆ ಆದ ಕೊಡುಗೆಯನ್ನು ನೀಡುವ ಮುಖಾಂತರ ಮೈಸೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದರು. ಶ್ರೀಯುತ ಎಂ.ಜಿ ಈಶ್ವರಪ್ಪನವರಿಗೆ ಬಾಲ್ಯದ ದಿನಗಳಿಂದಲೂ ಕೃಷಿ ಹಾಗೂ ಜಾನಪದ ಕ್ಷೇತ್ರದ ಕುರಿತು ಹೆಚ್ಚು ಪ್ರೇರಣೆಯಾದವರು ಇವರ ದೊಡ್ಡಪ್ಪನವರಾದ ಶ್ರೀ ಮಲ್ಲಪ್ಪನವರು. ಜಾನಪದದ ಗಣಿಯಂತಿದ್ದ ಇವರು ದೇಶಿ ಸೊಗಡನ್ನು ಮೈಗೂಡಿಸಿಕೊಂಡು, ತಮ್ಮ ಸುತ್ತಮುತ್ತಲಿನ ಪರಿಸರ ಹಾಗೂ ಸನ್ನಿವೇಶಗಳ ಕುರಿತು ಹಲವಾರು ಕಥೆ, ಪುರಾಣ ಹಾಗೂ ಐತಿಹ್ಯಗಳನ್ನು ತಮ್ಮಲ್ಲಿ ಕರಗತ ಮಾಡಿಕೊಂಡಿದ್ದರು. ಇವರಲ್ಲಿ ಕರಗತವಾದ ಈ ಕಲೆಯನ್ನು ಒಂದೊಂದಾಗಿಯೇ ಸಂದರ್ಭಾನುಸಾರವಾಗಿ ಇವರ ಮುಂದೆ ಪ್ರಸ್ತಾಪಿಸುತ್ತಿದ್ದರು. ಬಾಲ್ಯದ ದಿನಗಳಿಂದಲೂ ತಮ್ಮ ದೊಡ್ಡಪ್ಪನವರಿಂದ ಕಲಿತ ಈ ಪಾಠವು ಮುಂದೆ ಇವರ ಜಾನಪದ ಅಧ್ಯಯನದ ಸಂದರ್ಭದಲ್ಲಿ ಹೆಚ್ಚು ಆಪ್ತವಾಗತೊಡಗಿತು. ಈ ಎಲ್ಲಾ ಪಾಠಗಳು ಮುಂದೊಂದು ದಿನ ಜಾನಪದ ಕ್ಷೇತ್ರದ ವಿದ್ವತ್ತಿಗೆ ದಾರಿ ದೀಪವಾದವು. ಹೀಗಾಗಿ ಶ್ರೀಯುತ ಎಂ.ಜಿಯವರ ಜಾನಪದ ವಿದ್ವತ್ತಿಗೆ ಅವರ ದೊಡ್ಡಪ್ಪನವರು ಸಾಕಷ್ಟು ಪ್ರೇರಣೆಯಾಗಿ ನಿಂತಿದ್ದಾರೆ.
ಜಾನಪದ ವಿದ್ವತ್ತ್ ವಲಯದಲ್ಲಿ ಶ್ರೀಯುತ ಎಂ.ಜಿ ಈಶ್ವರಪ್ಪನವರದು ಬಹುದೊಡ್ಡ ಹೆಸರು. ಬಹುಮುಖಿ ಪ್ರತಿಭೆಯುಳ್ಳ ಇವರು ತಮ್ಮ ಅಧ್ಯಯನ ವಿಷಯಕ್ಕೆ ಮಾತ್ರ ಸೀಮಿತಗೊಳ್ಳದೆ, ಸಾಹಿತ್ಯ ವಲಯದ ವಿವಿಧ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಒಬ್ಬ ಅಧ್ಯಯನಕಾರ, ವಿದ್ವಾಂಸ, ಒಬ್ಬ ಚಿಂತಕ ಕೇವಲ ಅಧ್ಯಯನದಲ್ಲಿ ಕಾರ್ಯಪ್ರವೃತ್ತವಾದಾಗ ಅಲ್ಲಿನ ಆಳ ಅಗಲ ತಿಳಿಯುವುದಿಲ್ಲ. ಅಧ್ಯಯನದ ಜೊತೆ ಜೊತೆಯಲ್ಲಿ ತಾನು ಅಧ್ಯಯನ ಮಾಡುವ ವಿಷಯದ ಒಂದು ಭಾಗವಾಗಿ ಬೆರೆತಾಗ, ತನ್ನನ್ನು ಆ ಕ್ಷೇತ್ರದ ಪ್ರತಿನಿಧಿಯಾಗಿ ಗುರುತಿಸಿಕೊಂಡಾಗ ಮಾತ್ರವೇ ಒಂದು ಕ್ಷೇತ್ರದ ಸ್ಷಷ್ಟವಾದ ಚಿತ್ರಣವನ್ನು ಅರಿಯುವುದಕ್ಕೆ, ಅರಿತಿರುವುದನ್ನು ಸಂವೇದನಾತ್ಮಕ ನೆಲೆಯಲ್ಲಿ ಕಟ್ಟಿಕೊಡುವುದಕ್ಕೆ ಸಹಕಾರಿಯಾಗುತ್ತದೆ. ಈ ನೆಲೆಯಲ್ಲಿ ತಾನು ಆಯ್ದುಕೊಂಡ ಪ್ರತಿಯೊಂದು ಕ್ಷೇತ್ರದೊಂದಿಗೆ ಬೆರೆತು ದುಡಿಮೆ ಮಾಡಿದ ಕೀರ್ತಿ ಶ್ರೀಯುತ ಎಂ.ಜಿಯವರಿಗೆ ಸಲ್ಲುತ್ತದೆ. ತಾನು ಅಧ್ಯಯನಕ್ಕೆ ಆಯ್ದುಕೊಂಡ ಜಾನಪದ, ಕೃಷಿ, ನಾಟಕ, ರಂಗಭೂಮಿ, ಸಾಹಿತ್ಯ, ಸಂಸ್ಕøತಿ, ಅಧ್ಯಾಪನ, ಶೈಕ್ಷಣಿಕ ಶಿಸ್ತು ಹೀಗೆ ಹಲವಾರು ಕ್ಷೇತ್ರಗಳಲ್ಲಿ ಅಧ್ಯಯನ ಮಾಡಿರುವ ಇವರು, ಈ ಎಲ್ಲಾ ಕ್ಷೇತ್ರಗಳಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ. ಆ ಮೂಲಕವಾಗಿ ವಿಶಿಷ್ಟವಾದ ಅನುಭವವನ್ನು ಪಡೆದುಕೊಂಡಿದ್ದಾರೆ. ಮಣ್ಣಿನೊಂದಿಗೆ ಬೆರೆತಾಗ ಮಾತ್ರ ಮಣ್ಣಿನ ಸೊಗಡು ತಿಳಿಯುವುದು ಎನ್ನುವಂತೆ ಈ ಎಲ್ಲಾ ವಿದ್ವತ್ತ್ ಕ್ಷೇತ್ರಗಳ ಮಣ್ಣಿನ ವಾಸನೆಯನ್ನು ಹತ್ತಿರದಿಂದ ಬಲ್ಲವರಾಗಿದ್ದಾರೆ.
ಶ್ರೀಯುತ ಎಂ.ಜಿ ಈಶ್ವರಪ್ಪನವರು ಜಾನಪದ ವಿದ್ವಾಂಸರಾಗಿ ಹೆಚ್ಚು ಪ್ರಸಿದ್ಧಿಯನ್ನು ಪಡೆದವರು. ‘ಚಿತ್ರದುರ್ಗ ಜಿಲ್ಲೆಯ ವ್ಯವಸಾಯ ಜಾನಪದ’ ಎಂಬ ವಿಷಯದಲ್ಲಿ ಪಿಎಚ್.ಡಿ ಪದವಿಯನ್ನು ಪಡೆದ ಇವರು, ಇಲ್ಲಿ ದೇಶಿ ಕೃಷಿ ಪದ್ಧತಿಯ ಮಹತ್ವವನ್ನು ಎತ್ತಿಹಿಡಿದಿದ್ದಾರೆ. ಹಾಗೇಯೆ ಜಾನಪದ ಕ್ಷೇತ್ರಕ್ಕೆ ಸಂಬಂಧಿಸಿದಂತಹ ಹಲವಾರು ವಿಷಯಗಳ ಕುರಿತು ಅಧ್ಯಯನ ನಡೆಸಿ, ಸಾಕಷ್ಟು ಲೇಖನ ಹಾಗೂ ಕೃತಿಗಳನ್ನು ಸಾಹಿತ್ಯ ವಲಯಕ್ಕೆ ನೀಡಿದ್ದಾರೆ. ಇವರ ಜಾನಪದ ಕೃತಿಗಳಲ್ಲಿ ‘ಮ್ಯಾಸಬೇಡರು’ ಎಂಬ ಕೃತಿಯು ಇವರ ಮೊದಲ ಅಧ್ಯಯನ ಕೃತಿಯಾಗಿದೆ. ಹಾಗೆಯೇ ಬೇಸಾಯ ಪದ್ಧತಿ, ನಮ್ಮ ಬೇಸಾಯ, ಬಂಗಾರ ಕೂದಲ ಜೈರಾಣಿ, ಜಾನಪದ ಇಬ್ಬನಿಗಳು ಎಂಬ ಕೃತಿಗಳು ಸಾಕಷ್ಟು ಪ್ರಸಿದ್ಧಿಯನ್ನು ಪಡೆದುಕೊಂಡಿವೆ. ಜಾನಪದಕ್ಕೆ ಸಂಬಂಧಿಸಿದ ವಿವಿಧ ವಲಯಗಳಿಗೆ ಸಂಬಂಧಿಸಿದಂತೆ ಸುಮಾರು ನಲವತ್ತಕ್ಕೂ ಹೆಚ್ಚು ಲೇಖನಗಳನ್ನು ನಾಡಿನ ವಿವಿಧ ಪತ್ರಿಕೆಗಳನ್ನು ಪ್ರಕಟಿಸಿದ ಕೀರ್ತಿ ಶ್ರೀಯುತರಿಗೆ ಸಲ್ಲುತ್ತದೆ. ಶ್ರೀಯುತರಿಗೆ ಜಾನಪದ ಕ್ಷೇತ್ರದಲ್ಲಿನ ವಿಶೇಷ ಕಾಳಜಿಯಿಂದಾಗಿ ಜಾನಪದ ವಿದ್ವತ್ತ್ ಲೋಕದಲ್ಲಿ ಇವರು ತಮ್ಮದೆ ಆದ ಹೆಸರು ಗಳಿಸಿದ್ದಾರೆ.
ಶ್ರೀಯುತರು ಜಾನಪದ ಕ್ಷೇತ್ರ ಮಾತ್ರವಲ್ಲದೆ, ಸಾಹಿತ್ಯ ಮತ್ತು ನಾಟಕ ವಲಯದಲ್ಲಿಯೂ ಸಾಕಷ್ಟು ಸೇವೆಯನ್ನು ಸಲ್ಲಿಸುವ ಮೂಲಕ ಹೆಸರು ಗಳಿಸಿದ್ದಾರೆ. ವಿದ್ಯಾರ್ಥಿ ದೆಸೆಯಿಂದಲೂ ನಾಟಕ ಕ್ಷೇತ್ರದಲ್ಲಿ ವಿಶೇಷವಾದ ಆಸಕ್ತಿಯನ್ನು ಮೈಗೂಡಿಸಿಕೊಂಡಿದ್ದ ಇವರು, ಕನ್ನಡ ಸಾಹಿತ್ಯದಲ್ಲಿ ಪ್ರಕಟಗೊಂಡ ಸಾಕಷ್ಟು ನಾಟಕಗಳನ್ನು ಅಧ್ಯಯನಕ್ಕೆ ಒಳಪಡಿಸಿದ್ದಾರೆ. ಹಾಗೆಯೇ ನಾಟಕ ಕಲಾವಿದರಾಗಿಯೂ ಬಣ್ಣದ ಬದುಕಿನೊಳಗೆ ತಮ್ಮನ್ನು ಗುರುತಿಸಿಕೊಂಡಿರುತ್ತಾರೆ. 1979 ರಲ್ಲಿ ಕೇರಳದ ತ್ರಿಚೂರಿನಲ್ಲಿ ವಿಶ್ವವಿದ್ಯಾಲಯದ ಧನಸಹಾಯ ಆಯೋಗವು ಸ್ಕೂಲ್ ಆಫ್ ಡ್ರಾಮಾದ ವತಿಯಿಂದ ನಡೆಸಿದ ರಾಷ್ಟ್ರಮಟ್ಟದ ರಂಗಭೂಮಿ, ರಂಗನಟನೆ, ರಂಗ ನಿರ್ದೇಶನ ಕುರಿತ ತರಬೇತಿ ಶಿಬಿರದಲ್ಲಿ ಪಾಲ್ಗೊಂಡು ನಾಟಕದ ಕುರಿತು ಅನುಭವವನ್ನು ಪಡೆದುಕೊಂಡಿರುತ್ತಾರೆ. ಹಾಗೆಯೇ 1983 ರಲ್ಲಿ ಕರ್ನಾಟಕ ನಾಟಕ ಅಕಾಡೆಮಿ ನೀಡಿದ ಧನಸಹಾಯ ಪಡೆದು ರಂಗದಿಗ್ಗಜರಾದ ಶ್ರೀ ಬಿ.ವಿ. ಕಾರಂತರ ಮಾರ್ಗದರ್ಶನದಲ್ಲಿ ಮಧ್ಯಪ್ರದೇಶದ ಭೂಪಾಲ್ ಮತ್ತು ದೇಹಲಿಯಲ್ಲಿ ರಂಗಭೂಮಿ ಕುರಿತು ಅಧ್ಯಯನ ಕೈಗೊಂಡಿರುತ್ತಾರೆ. ಇಷ್ಟೇ ಅಲ್ಲದೆ, 1979 ರಲ್ಲಿ ಹೆಗ್ಗೋಡಿನಲ್ಲಿ ನಡೆದ ‘ಚಲನಚಿತ್ರ ಸಹೃದಯ ಶಿಬಿರ’ ಹಾಗೂ 1983ರಲ್ಲಿ ನಾಟಕ ಅಕಾಡೆಮಿ ಕೊಂಡಾಜಿಯಲ್ಲಿ ನಡೆಸಿದ ನಾಟಕ ರಚನಾ ಶಿಬಿರದಲ್ಲಿ ಪಾಲ್ಗೊಂಡು ನಾಟಕ ಮತ್ತು ರಂಗಭೂಮಿ ಕ್ಷೇತ್ರದ ಬಗೆಗೆ ವಿದ್ವತ್ತನ್ನು ಗಳಿಸಿರುತ್ತಾರೆ. ನಾವು ಈ ಹಿಂದೆ ಗುರುತಿಸಿದಂತೆ ಶ್ರೀಯುತ ಎಂ.ಜಿಯವರು ಕೇವಲ ಅಧ್ಯಯನಕಾರರಾಗಿ ಗುರುತಿಸಿಕೊಂಡವರಲ್ಲ. ತಾವು ಅಧ್ಯಯನ ಮಾಡಿದ ಕ್ಷೇತ್ರದೊಳಗೆ ಬೆರೆತು ಬಂದವರು. ಇದಕ್ಕೆ ನಿದರ್ಶನ ಎನ್ನುವಂತೆ ನಾಟಕ ಹಾಗೂ ರಂಗಭೂಮಿಯ ಅಧ್ಯಯನ ಜೊತೆಯಲ್ಲಿ ರಂಗನಟರಾಗಿಯೂ ತಮ್ಮ ಸೇವೆಯನ್ನು ಸಲ್ಲಿಸಿರುತ್ತಾರೆ.
ದಾವಣಗೆರೆಯ ಪ್ರತಿಷ್ಠಿತ ಸಾಹಿತ್ಯಕ ಮತ್ತು ಸಾಂಸ್ಕøತಿಕ ಸಂಸ್ಥೆಯಾದ ‘ಪ್ರತಿಮಾಸಭಾ’ದ ರಂಗಶಿಬಿರದಲ್ಲಿ ಕ್ರಿಯಾತ್ಮಕವಾಗಿ ತಮ್ಮನ್ನು ತೊಡಗಿಸಿಕೊಂಡು, ಮೆರವಣಿಗೆ, ಈಡಿಪಸ್, ಸಂಕ್ರಾಂತಿ, ಸಂತೆಯಲ್ಲಿ ನಿಂತ ಕಬೀರ, ಸೆಜುವಾನಿನ ಸಾಧ್ವಿ, ಕೊಡೆಗಳು ಹಾಗೂ ಮುಂತಾದ ನಾಟಕಗಳಲ್ಲಿ ತಮ್ಮ ನಟನೆಯನ್ನು ಪ್ರದರ್ಶಿಸಿರುತ್ತಾರೆ. ಹಾಗೆಯೇ ಜಾತ್ರೆ, ಸಾಯೋ ಆಟ, ಅಪ್ಪ, ಕಡೇಮನೆ ಕಡೇಗಲ್ಲಿ, ಹಳ್ಳಿಚಿತ್ರ, ಹಳ್ಳಿಮೇಷ್ಟ್ರು, ಮಾರೀಚನ ಬಂಧುಗಳು, ಇಲಿಬೋನು, ನಾಗನ ಕತೆ ಮುಂತಾದ ನಾಟಕಗಳನ್ನು ನಿರ್ದೇಶನ ಮಾಡಿರುತ್ತಾರೆ. ಶ್ರೀಯುತರು ನಾಟಕ ಮತ್ತು ರಂಗಭೂಮಿ ಕ್ಷೇತ್ರಕ್ಕೆ ಸಲ್ಲಿಸಿದ ಅನುಪಮ ಮತ್ತು ನಿಸ್ವಾರ್ಥ ಸೇವೆಗೆ ಹಲವಾರು ಪುರಸ್ಕಾರಗಳು ಲಭಿಸಿವೆ. ಇವರ ‘ನಾಗನ ಕತೆ’ ನಾಟಕಕ್ಕೆ ಸಾಹಿತ್ಯ ಪರಿಷತ್ತು ನಡೆಸಿದ ಅಖಿಲ ಕರ್ನಾಟಕ ಮಕ್ಕಳ ಸಮ್ಮೇಳನದಲ್ಲಿ ಪ್ರಥಮ ಪ್ರಶಸ್ತಿ ಪುರಸ್ಕಾರ ಲಭಿಸಿದೆ. ನಾಟಕ ಮತ್ತು ರಂಗಭೂಮಿ ಇವರ ಅಧ್ಯಯನ ಕ್ಷೇತ್ರ ಮಾತ್ರವಾಗಿರದೆ, ಹವ್ಯಾಸ ಮತ್ತು ಅಭಿರುಚಿಯ ತಾಣವಾಗಿದೆ. ನಾಟಕ ಮತ್ತು ರಂಗಭೂಮಿಯಲ್ಲಿನ ಇವರ ವಿಶೇಷವಾದ ಕಾಳಜಿ ಹಾಗೂ ಶ್ರದ್ಧೆಯ ಫಲವಾಗಿ ಹಲವಾರು ಜಾನಪದ ವಸ್ತುಗಳನ್ನು ಕೇಂದ್ರವಾಗಿಟ್ಟುಕೊಂಡು ನಾಟಕ ರಚನೆಯಂತಹ ಕಾರ್ಯಕ್ಕೆ ಮುಂದಾಗಿ ಯಶಸ್ವಿಯನ್ನು ಪಡೆದುಕೊಂಡಿದ್ದಾರೆ. ಇದರ ಫಲವಾಗಿ ಹಲವಾರು ಜಾನಪದ ಕಲೆಗಳನ್ನು ರಂಗ ಪ್ರಯೋಗ ನಡೆಸುವ ಮೂಲಕವಾಗಿ ಜಾನಪದವನ್ನು ಉಳಿಸುವ, ಬೆಳೆಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ತಮ್ಮ ನಾಟಕ ಮತ್ತು ರಂಗಭೂಮಿಯಲ್ಲಿನ ವಿದ್ವತ್ತಿನಿಂದಾಗಿ ಗಿರೀಶ್ ಕಾರ್ನಾಡ್, ಚಂದ್ರಶೇಖರ್ ಕಂಬಾರರಂತಹ ಹಲವಾರು ಪ್ರಸಿದ್ಧ ನಾಟಕಕಾರರೊಂದಿಗೆ ನಿಕಟವಾದ ಸಂಬಂಧವನ್ನು ಹೊಂದಿರುತ್ತಾರೆ.
ಶ್ರೀಯುತ ಎಂ.ಜಿ ಈಶ್ವರಪ್ಪನವರು ಬಾಲ್ಯದ ದಿನಗಳಿಂದಲೂ ಜಾನಪದ ಪರಿಸರದೊಳಗೆ ಬೆಳೆದುಬಂದವರು. ಹೀಗಾಗಿ ಜಾನಪದ ಅನ್ನೊದು ಇವರಿಗೆ ತನ್ನತನದ ಸೊಗಡು. ಇದು ತನ್ನತನ ಮಾತ್ರವಲ್ಲದೆ, ತಾಯ್ತನದ ಸೊಗಡು ಕೂಡ ಹೌದು. ಇಂತಹ ತಾಯ್ತನದ ಸೊಗಡನ್ನು ಮೈಗೂಡಿಕೊಂಡ ಇವರು, ಈ ಜಾನಪದ ಸೊಗಡಿನ ಮೂಲಕವೇ ಮೌಲ್ಯಯುತವಾದ ಬದುಕಿಗೆ ಅಗತ್ಯವಾದ, ಜೀವಪರವಾದ ಆಶಯಗಳನ್ನು ಎತ್ತಿಹಿಡಿಯುವ ನೆಲೆಯಲ್ಲಿ ನಾಲ್ಕು ಸಿದ್ಧಾಂತಗಳನ್ನು ಕಂಡುಕೊಂಡಿದ್ದಾರೆ. ಅವುಗಳೆಂದರೆ, ಒಂದು, ಕೈ ಕೆಸರಾದರೆ ಬಾಯಿ ಮೊಸರು. ಎರಡು, ತುಂಬಿದಕೊಡ ತುಳುಕುವುದಿಲ್ಲ. ಮೂರು, ಹಾಸಿಗೆ ಇದ್ದಷ್ಟು ಕಾಲುಚಾಚು. ನಾಲ್ಕು, ತಾಳಿದವನು ಬಾಳಿಯಾನು. ಇವು ಶ್ರೀಯುತರು ತಮ್ಮ ಜನಪದ ಬದುಕಿನ ತಾಯ್ತನದ ಸೊಗಡಿನಲ್ಲಿ ಕಂಡುಕೊಂಡ ಪ್ರಮುಖವಾದ ಸಿದ್ಧಾಂತ. ಈ ಸಿದ್ಧಾಂತಗಳು ಅತ್ಯಂತ ಸರಳವಾಗಿದ್ದು, ಸರಳವಾದ ಬದುಕಿಗೆ ದಾರಿದೀಪದಂತಿವೆ. ನಮ್ಮ ನೆಲದಲ್ಲಿ ಜೀವಪರ ಕಾಳಜಿಯನ್ನು ಮೆರೆದ ಬುದ್ಧ, ಬಸವ, ಗಾಂಧೀಜಿ ಹಾಗೂ ಅಂಬೇಡ್ಕರ್ ಅವರಂತಹ ಮಹಾಶಯರು ವಿವಿಧ ರೂಪದಲ್ಲಿ ಸಾರಿದ್ದು ಇದೇ ಆಶಯಗಳನ್ನು. ಇವರೆಲ್ಲರ ಸಾರವನ್ನು ಶ್ರೀಯುತ ಎಂ.ಜಿಯವರು ತಮ್ಮ ಸುತ್ತಮುತ್ತಲಿನ ಜನಪದ ಬದುಕಿನೊಳಗೆ ಈ ಜೀವಪರವಾದ ಆಶಯಗಳನ್ನು ಕಂಡುಕೊಂಡಿದ್ದಾರೆ. ಇದು ಇವರ ಜನಪದೀಯ ಸಿದ್ಧಾಂತ. ಇದು ಅನ್ಯ ಪರಿಸರ, ಅನ್ಯ ಸಂಸ್ಕøತಿಯಿಂದ ಎರವಲು ಪಡೆದಿರುವುದಲ್ಲ. ತಮ್ಮ ನಿತ್ಯದ ಜನಪದ ಬದುಕಿನೊಳಗೆ ಕಂಡುಕೊಂಡ ನೆಲದನಿಯಾಗಿದೆ. ಈ ನೆಲದನಿಯೇ ನಮ್ಮ ಜನಪದ ಬದುಕಿನ ಸಾರ.
ಶ್ರೀಯುತರು ಜಾನಪದ ಕ್ಷೇತ್ರದಲ್ಲಿ ಆಳವಾದ ಅಧ್ಯಯನ ನಡೆಸುವ ಮೂಲಕವಾಗಿ ತಮ್ಮ ನೆಲದ ಸೊಗಡನ್ನು ಅರಿತವರು. ಈ ಅಧ್ಯಯನದ ಮೂಲಕವಾಗಿ ತಮ್ಮ ನೆಲದ ದನಿಯನ್ನು, ತಮ್ಮ ನೆಲದ ಸಾರವನ್ನು ಅರಿತವರು. ತಮ್ಮ ಈ ಅಧ್ಯಯನದ ಮೂಲಕ ತಾವು ಕಂಡುಕೊಂಡ ಸತ್ಯಗಳನ್ನು ವೈಜ್ಞಾನಿಕ ನೆಲೆಯಲ್ಲಿ ಗುರುತಿಸುವ ಪ್ರಯತ್ನವನ್ನು ಮಾಡಿರುತ್ತಾರೆ.
ಜಾನಪದ ಎಂದರೆ ಅವೈಜ್ಞಾನಿಕ, ಮೌಢ್ಯತೆಯಿಂದ ಕೂಡಿದ್ದು ಎಂದು ಬಿಂಬಿಸಲು ಹೊರಟಿರುವ ವೈಜ್ಞಾನಿಕ ಜಗತ್ತಿಗೆ ಜಾನಪದದಲ್ಲಿ ಅಂತರ್ಗತವಾಗಿರುವ ಮೌಲ್ಯಯುತವಾದ ಹಾಗೂ ವೈಚಾರಿಕ ಅಂಶಗಳನ್ನು ಗುರುತಿಸಿದ್ದಾರೆ. ಹಾಗೆಯೇ ಜಾನಪದ ಬದುಕು ಹಾಗೂ ಸಂಸ್ಕøತಿಯಲ್ಲಿ ಅಂತರ್ಗತವಾಗಿರುವ ಅವೈಜ್ಞಾನಿಕವಾದ ಮತ್ತು ಸಮಾಜದ ಪ್ರಗತಿಗೆ ಮಾರಕವಾದ ಅಂಶಗಳನ್ನು ಸಹ ಗುರುತಿಸುವ ಮೂಲಕ ಜಾನಪದವನ್ನು ಪರಿಷ್ಕರಣೆ ಮಾಡುವತ್ತ ತಮ್ಮ ವಿದ್ವತ್ತನ್ನು ಪ್ರದರ್ಶಿಸಿದ ಕೀರ್ತಿಯು ಇವರಿಗೆ ಸಲ್ಲುತ್ತದೆ. ನಮ್ಮ ಜನಪದ ಬದುಕಿನೊಳಗೆ ಅಂತರ್ಗತವಾಗಿರುವ ಬಾಲ್ಯ ವಿವಾಹ, ದೇವದಾಸಿ ಪದ್ಧತಿ, ಪ್ರಾಣಿ ಬಲಿಯಂತಹ ಮಾರಕ ಅಂಶಗಳನ್ನು ವಿರೋಧಿಸುವ ಮೂಲಕ, ನಮ್ಮ ಭಾವನಾತ್ಮಕ ಸಂಬಂಧಗಳನ್ನು ಬೆಸೆಯುವಂತಹ ಕಲೆ ಹಾಗೂ ಸಂಸ್ಕøತಿಯನ್ನು ಪೋಷಿಸುವ ಮೂಲಕವಾಗಿ ಜಾನಪದದ ಉಳಿವಿಗಾಗಿ ತಮ್ಮದೆ ಆದ ನಿಲುವುಗಳನ್ನು ಎತ್ತಿಹಿಡಿದಿದ್ದಾರೆ. ಹಾಗೆಯೇ ತಮ್ಮಲ್ಲಿ ಅಂತರ್ಗತವಾದ ವಿದ್ವತ್ತಿನಿಂದಾಗಿ ಹಲವಾರು ಪಿಎಚ್.ಡಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನವನ್ನು ನೀಡಿರುತ್ತಾರೆ.
ಶ್ರೀಯುತರು ಜಾನಪದ, ಸಾಹಿತ್ಯ ಮತ್ತು ಸಾಂಸ್ಕøತಿಕ ವಲಯದಲ್ಲಿ ತಮ್ಮದೇ ಆದ ನಿಸ್ವಾರ್ಥ ಸೇವೆಯನ್ನು ಸಲ್ಲಿಸಿರುತ್ತಾರೆ. ಇದರ ಫಲವಾಗಿ 2011 ರಲ್ಲಿ ಶಿವಮೊಗ್ಗ ತಾಲ್ಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ, 2014 ರಲ್ಲಿ ದಾವಣಗೆರೆ ಜಿಲ್ಲಾ ಆರನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ, ಹಾಗೆಯೇ 2017 ರಲ್ಲಿ ದಾವಣಗೆರೆ ತಾಲ್ಲೂಕು ಶ್ಯಾಗಲೆ ಗ್ರಾಮದಲ್ಲಿ ನಡೆದ ‘ಕುವೆಂಪು ನುಡಿಜಾತ್ರೆ’ಯ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುತ್ತಾರೆ. ಶ್ರೀಯುತರ ಸೇವೆಯನ್ನು ಪರಿಗಣಿಸಿ ಹಲವಾರು ಪ್ರಶಸ್ತಿಗಳು ಇವರ ಮುಡಿಗೇರಿವೆ. ಅವುಗಳಲ್ಲಿ ಗುಂಡ್ಮಿ ಜಾನಪದ ಪ್ರಶಸ್ತಿ, ಕು.ಶಿ. ಹರಿದಾಸಭಟ್ಟ ಪ್ರಶಸ್ತಿ, ಕರ್ನಾಟಕ ಅಕಾಡೆಮಿ ಗೌರವ ಫೆಲೋಶಿಫ್, ಕರ್ನಾಟಕ ಜಾನಪದ ಅಕಾಡೆಮಿಯ ತಜ್ಞ ಪ್ರಶಸ್ತಿ, ರಂಗಸಂಸ್ಥಾನ ಜಾನಪದ ಪ್ರಶಸ್ತಿ, ಮಹಾಲಿಂಗ ರಂಗ ಪ್ರಶಸ್ತಿಗಳು ಪ್ರಮುಖವಾಗಿವೆ. ಮಹಾತ್ಮ ಗಾಂದೀಜಿಯವರ ತತ್ವಾದರ್ಶಗಳು, ತಮ್ಮ ದೊಡ್ಡಪ್ಪನವರಾದ ಶ್ರೀ ಮಲ್ಲಪ್ಪನವರಿಂದ ಕಲಿತ ಜನಪದೀಯ ಜ್ಞಾನವನ್ನು ಮೈಗೂಡಿಸಿಕೊಂಡು ಮುನ್ನಡೆಯುತ್ತಿರುವ ಶ್ರೀಯುತ ಡಾ.ಎಂ.ಜಿ ಈಶ್ವರಪ್ಪನವರು ಸಾಹಿತ್ಯ, ಸಾಂಸ್ಕøತಿಕ, ಬೋಧನೆ ಹಾಗೂ ಆಡಳಿತಾತ್ಮಕ ವಲಯದಲ್ಲಿ ಪ್ರಾಮಾಣಿಕವಾಗಿ ದುಡಿಯುತ್ತಿದ್ದಾರೆ. ಸರಳ ಹಾಗೂ ಸಜ್ಜನಿಕೆಗೆ ಹೆಸರಾದ ಶ್ರೀಯುತರಿಂದ ಸಾಹಿತ್ಯ ಮತ್ತು ಸಾಂಸ್ಕøತಿಕ ವಲಯವು ಮತ್ತಷ್ಟು ಶ್ರೀಮಂತಿಕೆಯನ್ನು ಪಡೆಯುಂತಾಗಲಿ ಎಂಬುದು ನಮ್ಮ ಹಾರೈಕೆ.

ಅಂಕಣ
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.
ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.
ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.
ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.
ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ
ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.
ಕನ್ನಡಿಗರ ಮನದ ಜಾನಕಿ
ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.
ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.
ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.
ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.
ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ
ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.
ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.
ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.
ಧ್ವನಿಯೊಳಗಿದ್ದ ಸಾವಿರ ರೂಪಗಳು
ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.
ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ
ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.
ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.
ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ
ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.
ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.
ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ
ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.
ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.
ಸರಳತೆಯೇ ಅವರ ಅಲಂಕಾರ
ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.
ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ
ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.
ಸಂಗೀತ ಲೋಕದ ಕಂಬನಿ
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.
ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ
ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.
ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.
ಸ್ವರ ಮೌನವಾದರೂ…
ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.
ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.
ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.
ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ
ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು ಕೇವಲ ಚರಿತ್ರೆಯ ರಚನೆಗೆ ಮಾತ್ರ ಕಾರಣವಾಗದೆ, ಸಮೂಹಗಳ ಸಾಮಾಜಿಕ-ರಾಜಕೀಯ ಸಮಾನತೆ, ಸ್ವಾಯತ್ತತೆಯನ್ನೂ ಕಲ್ಪಿಸುವುದಕ್ಕೂ ಬದ್ಧವಾಗಿರುತ್ತವೆ. ಆರ್ಥಿಕತೆಯ ನಿಲುವುಗಳ ಮೂಲಕ ಭಾರತದ ಚರಿತ್ರೆಯನ್ನು ವ್ಯಾಖ್ಯಾನಿಸುವ ಕ್ರಮಗಳನ್ನು ಅಂಬೇಡ್ಕರ್ ಅವರು ಅತ್ಯಂತ ಕಟುವಾಗಿಯೇ ವಿಮರ್ಶಿಸುತ್ತಾರೆ.
ಸಮಾಜವಾದಿಗಳು ಮತ್ತು ಮಾರ್ಕ್ಸ್ವಾದಿಗಳು ಆರ್ಥಿಕತೆಯ ನೆಲೆಯಿಂದ ಭಾರತದಲ್ಲಿ ಚರಿತ್ರೆಗಳನ್ನು ನಿರ್ವಚಿಸುವ ಪ್ರಯತ್ನವನ್ನು ಮಾಡಿರುತ್ತಾರೆ ಎನ್ನುವುದನ್ನು ಇಲ್ಲಿ ಗಮನಿಸಬಹುದು. ಭಾರತದ ಚರಿತ್ರೆಗಳಲ್ಲಿ ದಾಖಲಾಗಿರುವ ಯಾವುದೇ ರಾಜಕೀಯ ಕ್ರಾಂತಿ/ಹೋರಾಟಗಳು ಯಾವಾಗಲೂ ಸಾಮಾಜಿಕ-ಧಾರ್ಮಿಕ ಕ್ರಾಂತಿಗಳಿಂದ ಮಾತ್ರ ಕೂಡಿರುವುದನ್ನೂ ಅಂಬೇಡ್ಕರ್ ಅವರು ಇಲ್ಲಿ ಗುರುತಿಸುತ್ತಾರೆ. ಭಾರತದಲ್ಲಿ ಅಷ್ಟೆಯಲ್ಲ, ಅಮೆರಿಕ, ಯುರೋಪ್, ಅರೇಬಿಯಾ ದೇಶಗಳಲ್ಲಿಯೂ ಇದೇ ಬಗೆಯ ಚರಿತ್ರೆಯ ನಿರ್ಮಾಣವು ನಡೆದಿರುವುದನ್ನು ನೋಡುತ್ತೇವೆ. ಮತ್ತು ಶಿವಾಜಿ, ಚಂದ್ರಗುಪ್ತ ಮೌರ್ಯ, ಸಿಖ್ ರಾಜ್ಯಗಳ ರಾಜರುಗಳಿಂದ ಕೈಗೊಳ್ಳಲಾದ ರಾಜಕೀಯ ಕ್ರಾಂತಿಗಳು, ಬುದ್ಧ, ಗುರು ನಾನಕ್ ಹಾಗೂ ಇತರ ಸಾಧು ಸಂತರ ಸಾಮಾಜಿಕ, ಧಾರ್ಮಿಕ ಚಳವಳಿಗಳ ಮೂಲಕ ಕಂಡಿರುತ್ತೇವೆ.
ಆದರೆ ಪರಿಣಾಮಗಳಲ್ಲಿ ಅಗಾಧವಾದ ವ್ಯತ್ಯಾಸಗಳನ್ನೂ ನಾವು ಇವತ್ತು ಕಾಣುತ್ತೇವೆ ಹಾಗೂ ಭಾರತದ ಚರಿತ್ರೆಗಳನ್ನು ಕುರಿತು ಬ್ರಿಟಿಶರು ತಾಳಿರುವ ಧೋರಣೆಗಳು ಅತ್ಯಂತ ದೋಷಪೂರಿತ ನೆಲೆಗಳಿಂದ ಕೂಡಿದ್ದವು ಎಂಬುದನ್ನು ಅಂಬೇಡ್ಕರ್ ಅವರು ಅತ್ಯಂತ ಬಲವಾಗಿ ನಂಬಿದ್ದರು. ಮತ್ತು ಅವುಗಳನ್ನು ಬಿಡಿಸಿ ತೋರಿಸುವುದಕ್ಕೆ ಬೇಕಾದ ಪರಿಕರಗಳನ್ನೂ ತಮ್ಮ ಅಧ್ಯಯನಗಳ ಮೂಲಕ ರೂಪಿಸಿರುತ್ತಾರೆ.
ಭಿನ್ನ ಸಂವೇದನೆಯ ಮೂಲಕ ಭಾರತವನ್ನು ಗ್ರಹಿಸಿದ ಅಂಬೇಡ್ಕರ್ ಚಿಂತನೆಗಳು ಹಾಗೂ ಸಾಮಾಜಿಕವಾಗಿ ಅತ್ಯಂತ ಸೂಕ್ಷ್ಮ ನಿಲುವುಗಳಾಗಿ ಯಾವತ್ತಿಗೂ ಚರ್ಚೆಗೆ ಒಳಪಡುತ್ತಿರುವ ‘ಅಲ್ಪಸಂಖ್ಯಾತರು’ ‘ಲಿಂಗ’ ಹಾಗೂ ‘ಜಾತಿ’ಗಳ ನಡುವೆ ಒಂದು ಬಗೆಯ ತಾರ್ಕಿಕ ನಂಟನ್ನು ಏರ್ಪಡಿಸಬಹುದು. ರಾಷ್ಟ್ರೀಯತೆಯ ಜೊತೆಗೆ ಅಲ್ಪಸಂಖ್ಯಾತರು, ಲಿಂಗ ಹಾಗೂ ಜಾತಿಯ ವಿನ್ಯಾಸಗಳನ್ನು ಇಟ್ಟು ನೋಡಿದರೆ, ರಾಷ್ಟ್ರೀಯತೆ ಎನ್ನುವುದು ಕೇವಲ ಏಕಾಕೃತಿಯ ನೆಲೆಯನ್ನಾಗಿ ಬಿಂಬಿಸಲಾಗುತ್ತದೆ. ಇಂತಹ ಏಕಾಕೃತಿ ನಿಲುವುಗಳನ್ನು ಭಗ್ನ ಮಾಡುವ ಅತ್ಯಂತ ಪ್ರಖರವಾದ ಚಿಂತನೆಗಳನ್ನು, ಅಲ್ಪಸಂಖ್ಯಾತ, ಲಿಂಗ, ಜಾತಿ ಮತ್ತು ಧರ್ಮಗಳ ವಿನ್ಯಾಸಗಳನ್ನು ನೆಲೆಯಾಗಿಸಿಕೊಂಡು ಅಂಬೇಡ್ಕರ್ ಅವರು ಚಿಂತಿಸಿರುತ್ತಾರೆ. ಹಾಗೂ ಈ ಚಿಂತನೆಗಳ ಮುಖೇನವೇ ಸಾಂಸ್ಕೃತಿಕ-ಚಾರಿತ್ರಿಕ ಬಹುಳತೆಯನ್ನು ಕಂಡರಿಸುವ ದಾರಿಗಳನ್ನೂ ಅವರ ಚಿಂತನೆಗಳಲ್ಲಿ ಕಾಣಬಹುದಾಗಿದೆ.
ಅಂದರೆ ಅಂಬೇಡ್ಕರ್ ಅವರ ಸೈದ್ಧಾಂತಿಕ ತಿಳಿವಿನ ಚೌಕಟ್ಟನ್ನು ಅರಿಯಬೇಕೆಂದರೆ, ಅವರು ಫ್ರೆಂಚ್ ಕ್ರಾಂತಿಯಿಂದ ಎರವಲು ಪಡೆದಿರುವ ಸಾಮಾಜಿಕ-ರಾಜಕೀಯ ‘ತ್ರಿಕೂಟ’ (ಟ್ರಿನಿಟಿ) ಪರಿಕಲ್ಪನೆಗಳನ್ನು ಇಲ್ಲಿ ನಾವು ಪರಿಗಣನೆಗೆ ತೆಗೆದುಕೊಳ್ಳುವ ಅಗತ್ಯವಿದೆ. ‘ಸ್ವಾತಂತ್ರ್ಯ, ಸಮಾನತೆ ಹಾಗೂ ಸಹೋದರತ್ವ’ ಎಂಬುದಾಗಿ ಈ ತ್ರಿಕೂಟ ಪರಿಕಲ್ಪನೆಗಳನ್ನು ಗುರುತಿಸಬಹುದು.
ಫ್ರೆಂಚ್ ಕ್ರಾಂತಿಯ ನಿಲುವುಗಳನ್ನು ಕುರುಡಾಗಿ ಅನುಕರಿಸುವುದಾಗಲೀ ಇಲ್ಲವೇ ಆ ಕ್ರಾಂತಿಯ ನಿಲುವುಗಳನ್ನು ಯಥಾವತ್ತಾಗಿ ಪಾಲಿಸುವುದಾಗಲೀ ಅಂಬೇಡ್ಕರ್ ಅವರ ಉದ್ದೇಶವಾಗಿರಲಿಲ್ಲ. ಆದರೆ ಈ ಕ್ರಾಂತಿಯಿಂದ ಪ್ರೇರಣೆಯನ್ನು ಮಾತ್ರ ಪಡೆದುಕೊಂಡಿರುತ್ತಾರೆ. ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳನ್ನು ಮರುಪರೀಕ್ಷಿಸುವುದು ಅಷ್ಟೆಯಲ್ಲದೆ ಅವುಗಳನ್ನು ಮರು ವಿನ್ಯಾಸಗೊಳಿಸಿರುವುದನ್ನೂ ಇಲ್ಲಿ ನೋಡಬಹುದು. ಅಂದರೆ, ಫ್ರೆಂಚ್ ಕ್ರಾಂತಿಯ ಸನ್ನಿವೇಶಕ್ಕಿಂತ ಮಿಗಿಲಾದ ಸಾಮಾಜಿಕ-ಸಾಂಸ್ಕೃತಿಕ ಆಯಾಮ ಮತ್ತು ಅರ್ಥಗಳನ್ನು ಅಂಬೇಡ್ಕರ್ ಅವರು ಈ ಪರಿಕಲ್ಪನೆಗಳಿಗೆ ಕೊಟ್ಟಿರುತ್ತಾರೆ.
ಜಾತಿಕೇಂದ್ರಿತವಾದ ಭಾರತ ದೇಶವು ವರ್ಗಕೇಂದ್ರಿತವಾದ ಫ್ರೆಂಚ್ ದೇಶಕ್ಕಿಂತ ಸಹಜವಾಗಿಯೇ ಭಿನ್ನವಾಗಿದೆ. ಈ ಸಾಮಾಜಿಕ ವಿನ್ಯಾಸಕ್ಕೆ ಅನುಗುಣವಾಗಿಯೇ ಅಂಬೇಡ್ಕರ್ ಅವರು ಈ ತ್ರಿಕೂಟ ಪರಿಕಲ್ಪನೆಗಳ ತಾತ್ವಿಕತೆಯನ್ನು ರೂಪಿಸಿರುತ್ತಾರೆ. ಸಮೂಹಗಳ ಒಳ್ಳೆಯ ಬದುಕಿಗೆ ಈ ತ್ರಿಕೂಟಗಳು ಅತ್ಯಂತ ಅವಶ್ಯವೆಂಬುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು (ರೊಡ್ರಿಗಸ್, 2002). ಚರಿತ್ರೆಯ ನಿರ್ಮಾಣದಲ್ಲಿ ಹಾಗೂ ಸಾಮಾಜಿಕ ಬದುಕುಗಳನ್ನು ಕಟ್ಟಿಕೊಳ್ಳುವಲ್ಲಿ ಈ ಸಮಾನತೆ, ಸ್ವಾತಂತ್ರ್ಯ ಹಾಗೂ ಸಹೋದರತ್ವವು ಎಷ್ಟೊಂದು ಮಹತ್ವದ ಪಾತ್ರವನ್ನು ವಹಿಸಬಲ್ಲವು ಎನ್ನುವುದನ್ನು ಅಂಬೇಡ್ಕರ್ ಅವರು ಮನಗಂಡಿದ್ದರು.
ಅಂಬೇಡ್ಕರ್ ಅವರು ಗಾಂಧಿ ಮತ್ತು ಕಾಂಗ್ರೇಸ್ ಸಂಘಟನೆಯನ್ನು ಕುರಿತು ‘ವ್ಹಾಟ್ ಗಾಂಧಿ ಆ್ಯಂಡ್ ಕಾಂಗ್ರೇಸ್ ಹ್ಯಾವ್ ಡನ್ ಟು ದ ಅನ್ಟಚೇಬಲ್ಸ್’ ಎಂಬ ಬರಹದಲ್ಲಿ ಸಮೂಹಗಳ ಏಳ್ಗೆಯ ನೆಲೆಯಿಂದ ವಿಶ್ಲೇಷಣೆ ಮಾಡಿರುತ್ತಾರೆ. ಅಂದರೆ ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದಂತಹ ತ್ರಿಕೂಟ ಕಲ್ಪನೆಗಳು ಸಮೂಹಗಳ ಅಸ್ತಿತ್ವ, ಅಸ್ಮಿತೆ ಹಾಗೂ ಪ್ರಜ್ಞೆಯನ್ನು ಕುರಿತು ಮಾತ್ನಾಡಿದರೆ, ಕಾಂಗ್ರೆಸ್ ಸಂಘಟನೆಯು ರಾಷ್ಟ್ರೀಯತೆಯ ಕಲ್ಪನೆಯ ಬಗೆಗೆ ಮಾತ್ರ ಹೆಚ್ಚು ಕಾಳಜಿಯನ್ನು ವಹಿಸಿರುವುದನ್ನು ಇಲ್ಲಿ ನೋಡುತ್ತೇವೆ. ಆದರೆ ಗಾಂಧೀಜಿಯವರು ಸಾಂಪ್ರದಾಯಿಕ ರಾಷ್ಟ್ರೀಯತೆಯನ್ನು ಕುರಿತು ಯೋಚಿಸಿದರೆ, ನೆಹರೂ ಅವರು ಸಮಾಜವಾದದ ನೆಲೆಯಿಂದ ರಾಷ್ಟ್ರೀಯತೆಯ ಪ್ರಜ್ಞೆಯನ್ನು ರೂಪಿಸುವ ತುಡಿತವನ್ನು ಹೊಂದಿದ್ದರು. ಒಟ್ಟಾರೆ ರಾಷ್ಟ್ರೀಯತೆ ಬಗೆಗಿನ ನಿಲುವುಗಳಲ್ಲಿ ಬಹುಸಮಾಜಗಳು ಎದುರಿಸುವ ಸಾಮಾಜಿಕ-ರಾಜಕೀಯ ಬಿಕ್ಕಟ್ಟುಗಳು ಮಹತ್ವವನ್ನು ಪಡೆಯದೆ, ಕೇವಲ ರಾಷ್ಟ್ರ ಮತ್ತು ರಾಷ್ಟ್ರೀಯತೆಯ ಕುರಿತಾದ ಮೌಲ್ಯಗಳು ಮಾತ್ರ ಮುಂಚೂಣಿಗೆ ಬರುತ್ತವೆ.
ಹಾಗಾಗಿ ಭಾರತದ ಚರಿತ್ರೆಗಳಲ್ಲಿ ರಾಷ್ಟ್ರ, ರಾಷ್ಟ್ರ ಪ್ರಭುತ್ವ ಹಾಗೂ ರಾಷ್ಟ್ರೀಯತೆಗಳ ಮಹತ್ವ ಮತ್ತು ಹಿರಿಮೆಯ ಬಗೆಗಿರುವ ಕಾಳಜಿಗಳು, ಸಾಮಾಜಿಕ ಚರಿತ್ರೆಯನ್ನು ಬಿಂಬಿಸುವಲ್ಲಿ ಗೈರು ಆಗಿರುತ್ತವೆ. ಅಂಬೇಡ್ಕರ್ ಅವರು ಇಂತಹ ಚಾರಿತ್ರಿಕ ಲೋಪಗಳನ್ನು ಗುರುತಿಸುವ ಜೊತೆಗೆ, ರಾಜಕೀಯ ಪ್ರೇರಿತವಾದ ಚರಿತ್ರೆಗಳಿಗಿಂತ, ಸಾಮಾಜಿಕ ನೆಲೆಗಳಿಂದ ಚರಿತ್ರೆಯನ್ನು ಬರೆಯುವುದು ಎಷ್ಟೊಂದು ಮಹತ್ವದ ಕೆಲಸವೆಂಬುದನ್ನೂ ಮನಗಾಣಿಸಿದ್ದಾರೆ. ಸಾಮಾಜಿಕ ಚರಿತ್ರೆಗಳನ್ನು ಕಡೆಗಣಿಸಿ ರಾಷ್ಟ್ರೀಯತೆಯ ಕಲ್ಪನೆಯನ್ನು ಊಹಿಸುವುದು ಕೂಡ ದುಸ್ತರದ ಸಂಗತಿಯೆಂಬುದನ್ನು ಅಂಬೇಡ್ಕರ್ ಅವರು ಚಿಂತನೆಗಳು ನಮಗೆ ಮನವರಿಕೆ ಮಾಡುತ್ತವೆ. ಈ ಕಾರಣಗಳಿಂದ ‘ಚರಿತ್ರೆಯನ್ನು ಮರೆತವರು ಚರಿತ್ರೆಯನ್ನು ಸೃಷ್ಟಿಸಲಾರರು’ ಎಂಬ ನಿಲುವನ್ನು ಅತ್ಯಂತ ಬಲವಾಗಿಯೇ ಅಂಬೇಡ್ಕರ್ ಅವರು ನಂಬಿರುತ್ತಾರೆ ಎಂಬುದು ಅತ್ಯಂತ ಗಮನಾರ್ಹ ಸಂಗತಿ.
ಚರಿತ್ರೆ ಎಂಬುದು ಒಂದು ಕನಸಾಗಲೀ ಇಲ್ಲವೇ ಭ್ರಮೆಯಾಗಲೀ ಅಲ್ಲ ಹಾಗೂ ಚರಿತ್ರೆಯೆಂಬುದು ಒಂದು ನಿರ್ವಾತವೂ ಅಲ್ಲ ಮತ್ತು ತೆರಪುಗಳನ್ನು ತುಂಬುವ ಪ್ರಕ್ರಿಯೆಯೂ ಅಲ್ಲ. ಬದಲಾಗಿ ಅದೊಂದು ಸಾಮಾಜಿಕ-ಸಾಂಸ್ಕೃತಿಕ-ರಾಜಕೀಯ ಗ್ರಹಿಕೆ ಮತ್ತು ಜ್ಞಾನಶಿಸ್ತು ಆಗಿರುತ್ತದೆ. ಜ್ಞಾನಶಿಸ್ತುಗಳು ಮತ್ತು ಗ್ರಹಿಕೆಗಳು ಸಮೂಹ ಕೇಂದ್ರಿತವಾಗಿರುಬೇಕೆ ಹೊರತು ಕೇವಲ ರಾಜಕೀಯ-ಸಾಮಾಜಿಕ ಪ್ರಾಬಲ್ಯವನ್ನು ಹೊಂದಿರುವ ವ್ಯಕ್ತಿಗಳ ಇಲ್ಲವೇ ಆಳುವ ವರ್ಗಗಳನ್ನು ಮಾತ್ರ ಪ್ರತಿನಿಧಿಸುವ ವಿನ್ಯಾಸಗಳಾಗಿ ಇವುಗಳು ಇರಲಾರವು. ಚರಿತ್ರೆಯೂ ಒಂದು ಜ್ಞಾನಶಿಸ್ತೇ ಆಗಿರುವುದರಿಂದ, ಇದು ಬಹುಸಮೂಹಗಳನ್ನು ಪ್ರತಿನಿಧಿಸುವ ವಿನ್ಯಾಸವಾಗಬೇಕು ಎಂಬ ಅಚಲವಾದ ನಿಲುವನ್ನು ಅಂಬೇಡ್ಕರ್ ಅವರು ತಾಳಿದ್ದರು. ಯಾವುದೇ ಗ್ರಹಿಕೆಯು ಸಮೂಹ ಕೇಂದ್ರಿತವಾಗಿರುತ್ತದೆ ಎನ್ನುವ ನಿಲುವಿನಲ್ಲಿ ಅಂಬೇಡ್ಕರ್ ಅವರಿಗೆ ತಾತ್ವಿಕ ಹಾಗೂ ವೈಯಕ್ತಿಕವಾಗಿ ಅಪಾರವಾದ ನಂಬಿಕೆಯಿತ್ತು.
ಹಾಗಾಗಿ ಅಂಬೇಡ್ಕರ್ ಅವರು ನಿನ್ನೆಗಳನ್ನು ಕುರಿತಾದ ತಾತ್ವಿಕ ಪ್ರಶ್ನೆಗಳನ್ನು ಮೈಮೇಲೆ ಎಳೆದುಕೊಂಡು, ಅವುಗಳಿಗೆ ಉತ್ತರಗಳನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತಾರೆ. ನಿನ್ನೆಗಳು ತಮ್ಮ ಹಕ್ಕುಗಳೆಂದು ಯಾರು ವಾದಿಸುವವರೋ ಅವರೆಲ್ಲರಿಗೂ, ವರ್ತಮಾನದಲ್ಲಿ ಉಂಟಾಗಿರುವ ಬಿಕ್ಕಟ್ಟುಗಳಿಗೆ ಈ ನಿನ್ನೆಗಳು ಹೇಗೆ ಹೊಣೆಯಾಗಿವೆ ಎಂಬ ದಿಟವನ್ನು ಅರಿಯುವುದಕ್ಕೆ ಬೇಕಾದ ವಿಶ್ಲೇಷಣೆಗಳನ್ನು ಇವರು ಮಾಡಿರುತ್ತಾರೆ. ಅಂಬೇಡ್ಕರ್ ಅವರ ಈ ಹಾದಿಯು ಎಲ್ಲರಿಗೂ ಒಪ್ಪಿತವಾಗುವ ಸತ್ಯವನ್ನು ಹೇಳುವುದಲ್ಲ. ಬದಲಾಗಿ, ಎಲ್ಲ ಸಮೂಹಗಳ ಇವತ್ತಿನ ಬದುಕಿಗೆ ಅಗತ್ಯವಾಗಿರುವ ಹಾದಿಗಳನ್ನು ರೂಪಿಸುವುದಾಗಿತ್ತು. ಆದ್ದರಿಂದ, ಸದ್ಯದ ಚರಿತ್ರೆ, ಸಾಹಿತ್ಯ, ಸಂಸ್ಕೃತಿ, ಆರ್ಥಿಕತೆ ಹಾಗೂ ರಾಜಕಾರಣವನ್ನು ವಿಶ್ಲೇಷಿಸುವುದಕ್ಕೆ ಅಂಬೇಡ್ಕರ್ ಅವರು ರೂಪಿಸಿದ ಈ ತಾತ್ವಿಕ ವಿನ್ಯಾಸಗಳು ಅತ್ಯಂತ ಸಮರ್ಪಕವಾಗಿರುತ್ತವೆ. ಇವರ ಈ ತಾತ್ವಿಕ ವಿನ್ಯಾಸಗಳಲ್ಲಿ ಅನ್ಯ ಪ್ರಭಾವಕ್ಕಿಂತ ಪ್ರೇರಣೆಗಳನ್ನು ಮಾತ್ರ ನಾವು ಕಾಣುತ್ತೇವೆ. ಆದ್ದರಿಂದ ಅಂಬೇಡ್ಕರ್ ಅವರು ರೂಪಿಸಿದ ಮರುರಚನೆಯ (ರೀಕನ್ಸ್ಟ್ರಕ್ಸನ್) ಮಾದರಿಗಳು ಕೇವಲ ತೆರಪುಗಳನ್ನು ತುಂಬುವ ರಚನೆಗಳಾಗದೆ, ವರ್ತಮಾನದ ಬಿಕ್ಕಟ್ಟುಗಳಿಗೆ ಇವುಗಳು ಹೇಗೆ ಕಾರಣವಾಗಿರುತ್ತವೆ ಹಾಗೂ ಇವುಗಳಿಗೆ ಉತ್ತರಗಳನ್ನು ಕಂಡುಕೊಳ್ಳುವ ಬಗೆಗಳಾವುವು ಎಂಬೆಲ್ಲ ಸಂಗತಿಗಳನ್ನು ಕುರಿತು ಅತ್ಯಂತ ವಸ್ತುನಿಷ್ಠ ವಿಶ್ಲೇಷಣೆಗಳನ್ನು ತಮ್ಮ ಬರಹಗಳಲ್ಲಿ ಮಾಡಿರುತ್ತಾರೆ.
ಅಂಬೇಡ್ಕರ್ ಅವರಿಗಿಂತ ಮೊದಲು ಇಂತಹದೊಂದು ನೋಟಕ್ರಮಕ್ಕೆ ಚಾಲನೆಯನ್ನು ಕೊಟ್ಟವರು ಜ್ಯೋತಿರಾವ್ ಫುಲೆಯವರು. ಆದರೆ ಇವರಿಬ್ಬರ ತಿಳಿವಳಿಕೆಗಳನ್ನು ಹೋಲಿಸಿ ನೋಡುವ ಉದ್ದೇಶಕ್ಕಿಂತ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳು ಬೆಳೆಯುವುದಕ್ಕೆ ಬೇಕಾಗಿರುವ ಚಾರಿತ್ರಿಕ ಒತ್ತಡಗಳು ಹೇಗಿರುತ್ತವೆ ಎಂಬ ದಿಟವನ್ನು ಅರಿಯುವುದಕ್ಕೆ, ಫುಲೆಯವರ ಚಿಂತನೆಗಳನ್ನು ಇಲ್ಲಿ ಚರ್ಚಿಸಲಾಗಿದೆ. ಹಾಗೂ ಭಾರತದ ಸನ್ನಿವೇಶದಲ್ಲಿ ಚರಿತ್ರೆ ಕಥನಶಾಸ್ತ್ರಗಳ ವಿಭಿನ್ನ ಸ್ವರೂಪವನ್ನೂ ಈ ಮೂಲಕ ಅರಿಯಬಹುದಾಗಿದೆ. ಜ್ಞಾನಶಿಸ್ತುಗಳನ್ನು ರೂಪಿಸುವ ಪ್ರಕ್ರಿಯೆಯ ಭಾಗವಾಗಿ ಈ ಹಾದಿಯನ್ನು ಕರ್ನಾಟಕದ ವಿದ್ವತ್ ಲೋಕದಲ್ಲಿ ಇಡೀಯಾಗಿ ಅನುಸರಿಸುವುದನ್ನು ನಾನು ಕಾಣಲಾರೆ.
ಅಂದರೆ ಯಾರೂ ಈ ಹಾದಿಯನ್ನು ತುಳಿಯುತ್ತಿಲ್ಲವೆಂದು ಅರ್ಥವಲ್ಲ. ಬದಲಾಗಿ ಇದುವೇ ಮುಖ್ಯಧಾರೆ ಚಿಂತನೆಯ ಕ್ರಮವಾಗಿ ಭಾರತ ಇಲ್ಲವೇ ಕರ್ನಾಟಕದಲ್ಲಿ ಇನ್ನೂ ಬೆಳೆದಿಲ್ಲವೆಂದರ್ಥ. ಆದರೆ ಅಂಬೇಡ್ಕರ್ ಚಿಂತನೆಯ ಮಾದರಿಯೆಂಬುದನ್ನು ಕೇವಲ ಪರ್ಯಾಯ ಆಲೋಚನೆಯ ಕ್ರಮವನ್ನಾಗಿ ಮಾತ್ರ ನೋಡಲಾಗಿದೆ. ಈ ನಿಲುವು ಸರಿಯಲ್ಲ. ಏಕೆಂದರೆ, ಸಮೂಹಕೇಂದ್ರಿತ ಆಲೋಚನೆಯ ಕ್ರಮಗಳೇ ನಮ್ಮ ಮುಖ್ಯಧಾರೆಯ ಆಲೋಚನೆಯ ಕ್ರಮಗಳಾಗಬೇಕಾದ ತುರ್ತು ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
-
ದಿನದ ಸುದ್ದಿ5 days agoನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
-
ದಿನದ ಸುದ್ದಿ4 days agoಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ



