ದಿನದ ಸುದ್ದಿ
ಸರ್ಕಾರಿ, ಅನುದಾನಿತ, ಕಲ್ಯಾಣ ಕರ್ನಾಟಕದಲ್ಲಿನ ಖಾಲಿ ಇರುವ 25 ಸಾವಿರ ಶಿಕ್ಷಕರ ಹುದ್ದೆಗಳ ಭರ್ತಿಗಾಗಿ ಬಜೆಟ್ನಲ್ಲಿ ಅನುಮೋದನೆಗೆ ಪ್ರಸ್ತಾವನೆ : ಸಚಿವ ಎಸ್.ಮಧು ಬಂಗಾರಪ್ಪ
ಸುದ್ದಿದಿನ,ದಾವಣಗೆರೆ:ರಾಜ್ಯದಲ್ಲಿ 50 ಸಾವಿರ ಶಿಕ್ಷಕರ ಹುದ್ದೆಗಳ ಕೊರತೆ ಇದ್ದು 2025-26 ನೇ ಸಾಲಿನಲ್ಲಿ ಸರ್ಕಾರಿ, ಅನುದಾನಿತ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ 25 ಸಾವಿರ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಬಜೆಟ್ನಲ್ಲಿ ಅನುಮೋದನೆ ನೀಡಲು ಪ್ರಸ್ತಾವನೆ ಸಿದ್ದಪಡಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಎಸ್.ಮಧು ಬಂಗಾರಪ್ಪ ತಿಳಿಸಿದರು.
ಅವರು ಶುಕ್ರವಾರ ಜಗಳೂರು ತಾಲ್ಲೂಕಿನ ಹುಚ್ಚಂಗಿಪುರ ಗ್ರಾಮದಲ್ಲಿ ವಿಧಾನ ಪರಿಷತ್ ಸದಸ್ಯರು, ರಾಜ್ಯಸಭಾ ಸದಸ್ಯರು ಹಾಗೂ ಸರ್ಕಾರದ ಅನುದಾನ ಸೇರಿ ರೂ.3.5 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೈಟೆಕ್ ಕಟ್ಟಡವನ್ನು ಲೋಕಾರ್ಪಣೆ ಮಾಡಿ ಸಮಾರಂಭದಲ್ಲಿ ಮಾತನಾಡಿದರು. ಶಿಕ್ಷಕರ ಕೊರತೆ ನೀಗಿಸಲು ಈಗಾಗಲೇ 13500 ಶಿಕ್ಷಕರ ನೇಮಕಾತಿಗೆ ಆದೇಶ ನೀಡಲಾಗಿದೆ. ಆದರೂ 50 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇರುವುದರಿಂದ ಹಂತ ಹಂತವಾಗಿ ಖಾಲಿ ಹುದ್ದೆಗಳನ್ನು ಭರ್ತಿಗೆ ಕ್ರಮ ವಹಿಸಲಾಗುತ್ತದೆ ಎಂದರು.
ರಾಜ್ಯದಲ್ಲಿ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಸೇರಿ 76 ಸಾವಿರದಷ್ಟು ಶಾಲೆಗಳಿದ್ದು 1.08 ಕೋಟಿ ವಿದ್ಯಾರ್ಥಿಗಳು 1 ರಿಂದ 12 ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿದ್ದು ಒಟ್ಟು ನೌಕರರಲ್ಲಿ ಶೇ 37 ರಷ್ಟು ಸಿಬ್ಬಂದಿ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಸರ್ಕಾರಿ ಹಾಗೂ ಅನುದಾನಿತ ಶಾಲೆಯಲ್ಲಿ 57 ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳ ಕೊರತೆಯೂ ಇದ್ದು ಹಂತ ಹಂತವಾಗಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಜೊತೆಗೆ ದಾನಿಗಳಿಂದ ಶಾಲೆಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ನಮ್ಮ ಶಾಲೆ, ನಮ್ಮ ಜವಾಬ್ದಾರಿ ಪರಿಕಲ್ಪನೆಯನ್ನು ಜಾರಿಗೆ ತರಲಾಗಿದೆ ಎಂದರು.
ಪೌಷ್ಟಿಕತೆ ಹೆಚ್ಚಿಸಲು ಪ್ರತಿನಿತ್ಯ ಮೊಟ್ಟೆ
ಮಕ್ಕಳಲ್ಲಿನ ಅಪೌಷ್ಟಿಕತೆ ನಿವಾರಣೆಗಾಗಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಪ್ರತಿನಿತ್ಯ ಮೊಟ್ಟೆ ನೀಡಲಾಗುತ್ತಿದೆ. ಇದರಲ್ಲಿ ಆಜೀಂ ಪ್ರೇಂಜೀ ಪೌಂಢೇಷನ್ನಿಂದ ನಾಲ್ಕು ದಿನ, ಸರ್ಕಾರದಿಂದ 2 ದಿನ ಮೊಟ್ಟೆ ನೀಡಲಾಗುತ್ತಿದ್ದು ಸ್ಥಳೀಯವಾಗಿ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿ ನೀಡಲಾಗುತ್ತಿದೆ. ಎಲ್ಲ ದಿನವೂ ಮೊಟ್ಟೆ ನೀಡಿದರೆ ಉತ್ತಮ ಎಂದು ಅಭಿಪ್ರಾಯ ಪಟ್ಟ ಅವರು ಶಾಲೆಯಲ್ಲಿ ಮಕ್ಕಳ ಹಾಜರಾತಿ ಹೆಚ್ಚಿಸಲು ಮತ್ತು ಪೋಷಕರೊಂದಿಗೆ ಮಕ್ಕಳನ್ನು ಕರೆದುಕೊಂಡು ಹೋಗದೆ ಶಾಲೆಗೆ ಕಳುಹಿಸಬೇಕೆಂದು ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರು ಪ್ರತಿ ದಿನದ ಹಾಜರಾತಿಗೆ ರೂ.1 ರಂತೆ ಮಕ್ಕಳಿಗೆ ನೀಡಲಾಗುತ್ತಿತ್ತು, ನಂತರ ಮಧ್ಯಾಹ್ನ ಊಟ ನೀಡುತ್ತಾ ಬಂದು ಈಗ ಹಾಲು, ಮೊಟ್ಟೆಯನ್ನು ನೀಡಲಾಗುತ್ತಿದೆ. ಭವಿಷ್ಯದ ಪ್ರಜೆಗಳಾಗುವ ಮಕ್ಕಳು ಆರೋಗ್ಯವಂತರಾಗಿ ಉತ್ತಮ ಶಿಕ್ಷಣ ಪಡೆದು ದೇಶದ ಆಸ್ತಿಯಾಗಬೇಕು ಮತ್ತು ಸಂವಿಧಾನ ಉಳಿಯಲು ಎಲ್ಲರೂ ಶಿಕ್ಷಣವಂತರಾಗಬೇಕೆಂದರು.
ಗ್ರಂಥಾಲಯಗಳಿಗೆ ಮಹತ್ವ
ಶಾಲೆಗಳಿಗೆ ನೀಡುವ ಮಹತ್ವವನ್ನು ಗ್ರಂಥಾಲಯಗಳಿಗೆ ನೀಡುವ ಅವಶ್ಯಕತೆ ಇದೆ. ಜಗಳೂರು ಪಟ್ಟಣದಲ್ಲಿ ಮುಖ್ಯಗ್ರಂಥಾಲಯವನ್ನು ಬಹಳ ಸುಸಜ್ಜಿತವಾಗಿ ನಿರ್ಮಾಣ ಮಾಡಿ ನಡೆಸಲಾಗುತ್ತಿದೆ. ಗ್ರಂಥಾಲಯಗಳು ಶಿಕ್ಷಕ ರಹಿತವಾದ ವಿಶ್ವವಿದ್ಯಾನಿಲಯಗಳಿದ್ದಂತೆ, ಗ್ರಂಥಾಲಯಗಳಲ್ಲಿ ಅಧ್ಯಯನ ಮಾಡಿದ ಅನೇಕರು ಉನ್ನತ ಹುದ್ದೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಓದುಗರನ್ನು ಸಂದರ್ಶಿಸಿದಾಗ ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಆಯ್ಕೆಯಾಗಿದ್ದು ಕೆಎಎಸ್ ಅಧಿಕಾರಿಯಾಗುವ ಆಸೆ ಇದ್ದು ಮುಂದಿನ ದಿನಗಳಲ್ಲಿ ಪರೀಕ್ಷೆ ತೆಗೆದುಕೊಳ್ಳಲು ಈಗಿನಿಂದಲೇ ತಯಾರಿ ನಡೆಸುತ್ತಿದ್ದೇನೆ ಎಂಬ ಅಭಿಪ್ರಾಯ ವ್ಯಕ್ತವಾಯಿತು. ಇದೇ ಮಾದರಿಯಲ್ಲಿ ರಾಜ್ಯಾದ್ಯಂತ ಗ್ರಂಥಾಲಯಗಳನ್ನು ಅಭಿವೃದ್ದಿ ಮಾಡುವ ಗುರು ಹೊಂದಲಾಗಿದೆ ಎಂದರು.
8 ನೇ ತರಗತಿವರೆಗೆ ವಿಸ್ತರಣೆ
ಹುಚ್ಚಂಗಿಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1 ರಿಂದ 7 ನೇ ತರಗತಿವರೆಗೆ ಮಾತ್ರ ಇದ್ದು ಇದನ್ನು 8 ನೇ ತರಗತಿಯವರೆಗೆ 2025-26 ಶೈಕ್ಷಣಿಕ ವರ್ಷದಿಂದಲೇ ವಿಸ್ತರಣೆ ಮಾಡಲು ಆದೇಶಿಸಲಾಗಿದೆ. 9-10 ನೇ ತರಗತಿಯನ್ನು ಇಲ್ಲಿಯೇ ಮುಂದುವರೆಗೆಸಲು ಮಕ್ಕಳ ಸಂಖ್ಯೆಯನ್ನಾಧರಿಸಿ ಮುಂದಿನ ನಿರ್ಧಾರವನ್ನು ಇಲಾಖೆ ಕೈಗೊಳ್ಳಲಿದೆ, ಶಾಲೆಯ ಅಭಿವೃದ್ದಿಗೆ ರೂ.25 ಲಕ್ಷಗಳನ್ನು ಕೇಳಿದ್ದು ಅನುದಾನ ಬಿಡುಗಡೆ ಮಾಡಲಾಗುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡು ಮಾತನಾಡಿದ ಜಗಳೂರು ಶಾಸಕರಾದ ಚಿಕ್ಕಮ್ಮನಹಟ್ಟಿ ಬಿ.ದೇವೆಂದ್ರಪ್ಪ ಮಾತನಾಡಿ ವಿಧಾನ ಪರಿಷತ್ ಸದಸ್ಯರಾದ ಎನ್.ರವಿಕುಮಾರ್ ಅವರು ತಮ್ಮ ಅನುದಾನದಲ್ಲಿ ಹುಟ್ಟೂರಿನ ಶಾಲೆ ನಿರ್ಮಾಣಕ್ಕೆ ಶ್ರಮಿಸಿದ್ದಾರೆ, ಇದೇ ಮಾದರಿಯಲ್ಲಿ ಚಿಮ್ಮನಕಟ್ಟೆಯಲ್ಲಿಯು ಹೈಟೆಕ್ ಶಾಲೆ ನಿರ್ಮಾಣ ಮಾಡಲಾಗುತ್ತದೆ.
ಕ್ಷೇತ್ರದ ಎಲ್ಲಾ ಗ್ರಾಮಗಳಿಗೂ ನದಿ ನೀರನ್ನು ಕುಡಿಯುವ ಉದ್ದೇಶಕ್ಕೆ ಸರಬರಾಜು ಮಾಡಲು ಉದ್ದೇಶಿಸಿದ್ದು ಮುಂದಿನ ದಿನಗಳಲ್ಲಿ ಸಾಕಾರಗೊಳ್ಳಲಿದೆ. ಜಗಳೂರಿಗೆ ಬಾಲಕಿಯರ ಪದವಿ ಪೂರ್ವ ಕಾಲೇಜು ಬಹು ದಿನಗಳ ಬೇಡಿಕೆಯಾಗಿದ್ದು ಆರಂಭಿಸಲು ಶಿಕ್ಷಣ ಸಚಿವರಿಗೆ ಮನವಿ ಮಾಡಿದರು.
ವಿಧಾನಪರಿಷತ್ತಿನ ಸದಸ್ಯರಾದ ರವಿಕುಮಾರ್ ಎನ್ ಪ್ರಾಸ್ತಾವಿಕವಾಗಿ ಮಾತನಾಡಿ ಈ ಶಾಲೆಯಲ್ಲಿ ನಾನು ಓದಿದ್ದು ನಮ್ಮ ತಾಯಿಯ ಆಸೆಯಂತೆ ನಮ್ಮೂರಿಗೆ ಶಾಲಾ ಕಟ್ಟಡ ನಿರ್ಮಿಸಲು ಶ್ರಮಿಸಿದ್ದೇನೆ. ಈ ಹಿಂದೆ ನಾಲ್ಕನೇ ತರಗತಿವರೆಗೆ ಮಾತ್ರ ಇದ್ದು ಈಗ 7 ನೇ ತರಗತಿವರಗೆ ಇದೆ. ಇಲ್ಲಿನ ಜನರು ಶ್ರಮ ಜೀವಿಗಳಾಗಿದ್ದು ಕೆಲಸಕ್ಕಾಗಿ ವಲಸ ಹೋಗುತ್ತಾರೆ. ಆದ್ದರಿಂದ ಇಲ್ಲಿನ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲು ಸ್ಮಾರ್ಟ್ ಕ್ಲಾಸ್ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯವನ್ನು ಶಾಲೆಯಲ್ಲಿ ಕಲ್ಪಿಸಿದ್ದು ಇದಕ್ಕೆ ರಾಜ್ಯಸಭಾ ಸದಸ್ಯರ ಅನುದಾನ ಮತ್ತು ವಿಧಾನ ಪರಿಷತ್ರ ನಿಧಿಯಲ್ಲಿ 2.5 ಕೋಟಿ ನೀಡಲಾಗಿದೆ, ಒಟ್ಟು ರೂ.3.5 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಹಾಗೂ ಸುಸಜ್ಜಿತವಾದ ಶಾಲೆ ನಿರ್ಮಿಸಿದ್ದು ಕಂಪ್ಯೂಟರ್ ಸೇರಿದಂತೆ ಇತರೆ ಉದ್ದೇಶಗಳಿಗಾಗಿ ಇಲಾಖೆಯಿಂದ ರೂ.25 ಲಕ್ಷ ಅನುದಾನ ಬಿಡುಗಡೆ ಮಾಡಬೇಕೆಂದರು.
ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಜಿ ಎಂ ಮಾತನಾಡಿ ಗ್ರಾಮದಲ್ಲಿ ಸ್ವಚ್ಚತೆಯನ್ನು ಕಾಪಾಡಿಕೊಳ್ಳಬೇಕು, ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಹಾಕಬಾರದು ಎಂದರು.
ವಿಧಾನ ಪರಿಷತ್ ಸದಸ್ಯರಾದ ಪ್ರೊ;ಎಸ್.ವಿ. ಸಂಕನೂರು, ಕೆ.ಎಸ್. ನವೀನ್, ಚಿದಾನಂದಗೌಡ, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಮಾಜಿ ರಾಜ್ಯಸಭಾ ಸದಸ್ಯ ಕೆ.ಸಿ.ರಾಮಮೂರ್ತಿ, ದಿದ್ದಿಗಿ ಗ್ರಾ.ಪಂ ಅಧ್ಯಕ್ಷರಾದ ಗುತ್ಯಮ್ಮ ಸಿದ್ದಪ್ಪ, ಎಸ್ಡಿಎಂಸಿ ಅಧ್ಯಕ್ಷ ಪಿ.ಟಿ.ರಮೇಶ, ದಾನಿಗಳಾದ ಸ್ಪೇಸ್ ಮ್ಯಾನೇಜ್ಮೆಂಟ್ ಸಲ್ಯೂಷನ್ ಲಿಮಿಟೆಡ್ ಡಾ.ದಿನೇಶ್, ವೋಲ್ಲೋ ಗ್ರೂಪ್ ಜಿ.ವಿ.ರಾವ್, ಜಿ.ಪಂ.ಉಪಕಾರ್ಯದರ್ಶಿ ಕೃಷ್ಣನಾಯ್ಕ್ ಹಾಗೂ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9989346243

ದಿನದ ಸುದ್ದಿ
ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.
ಹೌದು! 2023ರ ಆಗಸ್ಟ್ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.
http://Visit : www.suddidina.com
ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ:
ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.
ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.
ಕುಟುಂಬದ ಬಜೆಟ್ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:
ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.
ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

ದಿನದ ಸುದ್ದಿ
ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.
http://Visit : www.suddidina.com
ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.
ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:
1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.
2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.
3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.
4. ಖರಗ್ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.
ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.
ಕರ್ನಾಟಕಕ್ಕೆ ಏನು ಲಾಭ?
ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.
ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.
ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ದಿನದ ಸುದ್ದಿ
ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.
ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:
ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.
http://Visit : www.suddidina.com
ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ
ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.
ದೃಢ ಕರ್ನಾಟಕದ ಸಂಕಲ್ಪ
ಶತಕದ ಪಥ – ಪ್ರಗತಿಯ ರಥ100 ದಿನಗಳು.. ಇದು ಕೇವಲ ಆರಂಭವಷ್ಟೇ. ಜನರ ಆಶಯಗಳಿಗೆ ಸ್ಪಂದಿಸಿ, ರಾಜ್ಯದ ಸಮಗ್ರ ಅಭಿವೃದ್ಧಿಗೆ ವೇಗ ನೀಡುವ ಸಂಕಲ್ಪದೊಂದಿಗೆ ಕಳೆದ 100 ದಿನಗಳಲ್ಲಿ ಹಲವು ಮಹತ್ವದ ಹೆಜ್ಜೆಗಳನ್ನು ಇಡಲಾಗಿದೆ. ಮುಂದಿನ ದಿನಗಳಲ್ಲಿ ಅಭಿವೃದ್ಧಿ, ಉದ್ಯೋಗ, ತಂತ್ರಜ್ಞಾನ, ಮೂಲಸೌಕರ್ಯ, ಶಿಕ್ಷಣ, ಕೃಷಿ ಹಾಗೂ… pic.twitter.com/NDViSWw6LV
— DK Shivakumar (@DKShivakumar) September 10, 2026
ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.
100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.
ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

-
ದಿನದ ಸುದ್ದಿ5 days agoಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ
-
ದಿನದ ಸುದ್ದಿ5 days agoರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
-
ದಿನದ ಸುದ್ದಿ5 days agoಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
-
ದಿನದ ಸುದ್ದಿ5 days agoಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
-
ದಿನದ ಸುದ್ದಿ5 days ago5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
-
ದಿನದ ಸುದ್ದಿ5 days agoಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
-
ದಿನದ ಸುದ್ದಿ5 days agoಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
-
ದಿನದ ಸುದ್ದಿ5 days agoವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್



