ದಿನದ ಸುದ್ದಿ
ಐಪಿಎಸ್ ಅಧಿಕಾರಿ ಮಧುಕರ ಶೆಟ್ಟರ ಸಾವು ಅಕಾಲಿಕ ಮತ್ತು ಆಘಾತಕಾರಿ
ಐಪಿಎಸ್ ಅಧಿಕಾರಿ ಮಧುಕರ ಶೆಟ್ಟರ ಸಾವು ಅಕಾಲಿಕ ಮತ್ತು ಆಘಾತಕಾರಿ. ಅವರ ಸೇವೆ ನಾಡಿಗೆ ಅಗತ್ಯವಿತ್ತು. ಅವರು ಕರ್ನಾಟಕದಿಂದ ಹೊರಹೋಗುವಂತಹ ವಾತಾವರಣ ನಿರ್ಮಿಸಿದ ನಮ್ಮ ಸಂವೇದನಾರಹಿತ ಮತ್ತು ಭ್ರಷ್ಟ ವ್ಯವಸ್ಥೆಯೇ ಅವರ ಸಾವಿಗೆ ನೇರ ಹೊಣೆ. ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಪ್ರಕರಣದಲ್ಲಿ ರಾಜ್ಯ ಹೈಕೋರ್ಟ್’ನ ಒಂದು ಭ್ರಷ್ಟ ತೀರ್ಪು ಅವರು ಕರ್ನಾಟಕದಿಂದ ಕೇಂದ್ರ ಸೇವೆಗೆ ಹೋಗುವ ಸಂದರ್ಭದಲ್ಲಿ ಅವರನ್ನು ತೀವ್ರವಾಗಿ ಬಾಧಿಸಿತ್ತು.
ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಅವರ ಸಹಪಾಠಿ ಯಾಗಿದ್ದ ಮೈಸೂರಿನ ಗೆಳೆಯ ಪೃಥ್ವಿ ದತ್ತ ಚಂದ್ರ ಶೋಭಿ ಒಮ್ಮೆ 2011 ರ ಸುಮಾರಿನಲ್ಲಿ ಅವರಿಗೆ ನನ್ನನ್ನು ಪರಿಚಯಿಸಿದ್ದರು. ಅಷ್ಟೊತ್ತಿಗೆ ಅವರಿಗೆ ವ್ಯವಸ್ಥೆಯ ಮೇಲೆ ಸಾಕಷ್ಟು ಭ್ರಮನಿರಸನ ಆಗಿತ್ತು. ಲೋಕಾಯುಕ್ತದಲ್ಲಿ ಇದ್ದ ಭ್ರಷ್ಟರನ್ನು ಮತ್ತು ನೀಚರನ್ನು ಜಸ್ಟೀಸ್ ಸಂತೋಷ್ ಹೆಗಡೆಯವರು ಸಾಕಷ್ಟು ಹತೋಟಿಗೆ ತರಲಿಲ್ಲ ಎನ್ನುವ ಅಸಮಾಧಾನ ಇತ್ತು. ಸಂತೋಷ್ ಹೆಗಡೆಯವರು ಜನಪ್ರಿಯತೆಯ ಉತ್ತುಂಗದಲ್ಲಿ ಇದ್ದಾಗಲೇ ಈ ವಿಚಾರದ ಬಗ್ಗೆ ಅವರು ಧ್ವನಿ ಎತ್ತಿದ್ದರು. ಈ ತರಹದ ಬೇಸರದಲ್ಲಿ ಅಮೆರಿಕದಲ್ಲಿ ಇದ್ದ ತಮ್ಮ ಪತ್ನಿ ಮತ್ತು ಚಿಕ್ಕವಯಸ್ಸಿನ ಮಗಳ ಬಳಿಗೆ ತೆರಳಿ ಅಲ್ಲಿಯೇ ಮೂರ್ನಾಲ್ಕು ವರ್ಷ ಇದ್ದು ಪಿ.ಎಚ್.ಡಿ ಮುಗಿಸಿಕೊಂಡು ವಾಪಸಾಗಿದ್ದರು.
ಅವರು ಹಿಂದಿರುಗಿ ಬಂದ ಮೇಲೆಯೂ ಸರ್ಕಾರ ಅವರನ್ನು ಸರಿಯಾಗಿ ನಡೆಸಿಕೊಂಡಿರಲಿಲ್ಲ. ಅವರು ಭ್ರಷ್ಟರೊಂದಿಗೆ ರಾಜಿ ಆಗುತ್ತಿರಲಿಲ್ಲ. ಎರಡು ವರ್ಷದ ಹಿಂದೆ ಕಟ್ಟಾ ಸುಬ್ರಹ್ಮಣ್ಯ ನಾಯ್ಡುವನ್ನು ರಾಜ್ಯ ಉಚ್ಛ ನ್ಯಾಯಾಲಯದ ಒಂದು ಅತಿ ಕೆಟ್ಟ ತೀರ್ಪು ದೋಷಮುಕ್ತಗೊಳಿಸಿದಾಗ ಬಹಳ ಬೇಸರಗೊಂಡಿದ್ದರು. ಅದೇ ಸಮಯದಲ್ಲಿ ನಾನು ಅವರನ್ನು ಇನ್ನೊಮ್ಮೆ ಭೇಟಿ ಆಗಿದ್ದೆ. ಬಹಳ ವಿಶ್ವಾಸದಿಂದ ಸುಮಾರು ಒಂದು ಗಂಟೆಯ ಕಾಲ ಅವರ ಕಚೇರಿಯಲ್ಲಿ ಮಾತನಾಡಿದ್ದೆವು. ಲೋಕಾಯುಕ್ತದಲ್ಲಿ ಇದ್ದಾಗ ಅವರೇ ಸಿದ್ಧಪಡಿಸಿದ್ದ ಸಾವಿರಾರು ಪುಟಗಳ ಸಾಕ್ಷ್ಯಾಧಾರಗಳ ದೋಷಾರೋಪ ಪಟ್ಟಿಯನ್ನು (ಚಾರ್ಜ್ ಶೀಟ್) ನ್ಯಾಯಾಲಯ ತಿರಸ್ಕರಿಸಿದ್ದ ಬಗ್ಗೆ ತೀವ್ರವಾಗಿ ನೊಂದಿದ್ದರು. ಕಾನೂನು ಪದವಿ ಮಾಡಿ ಆ ಭ್ರಷ್ಟ ತೀರ್ಪು ನೀಡಿದ ನ್ಯಾಯಮೂರ್ತಿಯ ಮುಂದೆ ನಿಂತು ಆತನ ಮುಖಕ್ಕೆ ರಾಚುವಂತೆ ಹೇಳುವ ಅಭಿಲಾಷೆಯ ಮಾತನ್ನು ನನ್ನೊಂದಿಗೆ ಆಡಿದ್ದರು. ಆದರೆ ಕೆಲವೇ ತಿಂಗಳುಗಳಲ್ಲಿ ಕೇಂದ್ರ ಸೇವೆಗೆಂದು ಹೈದರಾಬಾದ್’ಗೆ ಹೋದರು. ನಾಡು ಅವರನ್ನು ಶಾಶ್ವತವಾಗಿ ಕಳೆದುಕೊಂಡಿತು.
https://m.facebook.com/story.php?story_fbid=2474973089242008&id=100001880229123
ಸರಳರೂ ಪ್ರಾಮಾಣಿಕರೂ ಆಗಿದ್ದ ಅವರು ಮಿತಭಾಷಿಯೂ ಆಗಿದ್ದರು. ಬೌದ್ಧಿಕತೆಯೂ ಇತ್ತು. ಹಾಗಾಗಿ ಸಹಜವಾಗಿ ಅವರಿಗೆ ಇಲಾಖೆಯಲ್ಲಿ ಹೆಚ್ಚು ಜನ ಆಪ್ತ ಸ್ನೇಹಿತರು ಇದ್ದಂತಿರಲಿಲ್ಲ. ಆರಡಿಗಿಂತ ಎತ್ತರವಾಗಿದ್ದ ಅವರು, ಒಳ್ಳೆಯ ಬಾಡಿಬಿಲ್ಡರ್ ತರಹದ ದೇಹದಾರ್ಢ್ಯ ಹೊಂದಿದ್ದರು. ಕನ್ನಡದ ಪ್ರಾಮಾಣಿಕ ಮತ್ತು ಹೆಸರುವಾಸಿ ಪತ್ರಕರ್ತರಾಗಿದ್ದ ವಡ್ಡರ್ಸೆ ರಘುರಾಮ ಶೆಟ್ಟರ ಮಗನಾಗಿದ್ದ ಕಾರಣಕ್ಕೆ ಕನ್ನಡದಲ್ಲೂ ಅವರಿಗೆ ಸಾಕಷ್ಟು ಹಿಡಿತ ಇತ್ತು.
ತಮ್ಮದಲ್ಲದ ತಪ್ಪಿಗೆ ಇನ್ನೊಬ್ಬರಿಗೆ ಆಗುವ ಅನಾಹುತಗಳಿಗೆ ಮರುಗುವ ಮತ್ತು ಪೊಲೀಸ್ ಉದ್ಯೋಗಕ್ಕೆ ಅಪರೂಪವಾದ ಮತ್ತು ಕೆಲವೊಮ್ಮೆ ಅನಗತ್ಯವಾದ ಅನುಕಂಪ ಮತ್ತು ಪಾಪಪ್ರಜ್ಞೆಯೂ ಅವರಿಗಿತ್ತು. ಸೂಕ್ಷ್ಮ ಮತ್ತು ಸಂವೇದನಾಶೀಲ ವ್ಯಕ್ತಿಗಳ ಅಗಲಿಕೆ ಮತ್ತು ದಾರಿದ್ರ್ಯ ಸಮಾಜವನ್ನು ಹಿಂಸೆ ಮತ್ತು ಪಾಪದತ್ತ ದೂಡುತ್ತದೆ.
https://www.facebook.com/ravikrishnareddy2011
ಮುಂದಿನ ದಿನಗಳಲ್ಲಿ ಅವರು ಕರ್ನಾಟಕಕ್ಕೆ ವಾಪಸಾಗುತ್ತಾರೆ ಮತ್ತು ಹಿರಿಯ ಅಧಿಕಾರಿಯೂ ಆಗುತ್ತಾರೆ ಎನ್ನುವ ವಿಶ್ವಾಸ ಇತ್ತು ಮತ್ತು ಆ ಮೂಲಕ ನಮ್ಮ ಕೆಲವು ಹೋರಾಟಗಳಿಗೆ ನ್ಯಾಯ ಪಡೆಯುವುದೂ ಸಾಧ್ಯವಾಗಬಹುದು ಎನ್ನುವ ಆಸೆ ನನಗಿತ್ತು. ಅನಿರೀಕ್ಷಿತವಾಗಿ ಶೆಟ್ಟರು ನೆನ್ನೆ ರಾತ್ರಿ ನಮ್ಮನ್ನೆಲ್ಲ ಅಗಲಿದ್ದಾರೆ. ಅವರ ಕುಟುಂಬದವರಿಗೆ ಈ ಸಾವನ್ನು ಭರಿಸುವ ಶಕ್ತಿ ದೊರೆಯಲಿ.
-ರವಿಕೃಷ್ಣ ರಡ್ಡಿ
ರಾಜಕಾರಣಿ
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ಪ್ರಾಚಾರ್ಯರು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರ ಸಹಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಹುಬ್ಬಳ್ಳಿಯ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕರಾದ ರಮೇಶ್ ದೇಸಾಯಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಸರ್ಕಾರದಿಂದ ವಿತರಣೆಯಾದ ಟೂಲ್ಕಿಟ್ಗಳನ್ನು ನಿಯಮಾನುಸಾರ ವಿತರಣೆ ಮಾಡದೆ ವಂಚಿಸಿರುವ ಅಧಿಕೃತ ಮಾಹಿತಿಯ ಆಧಾರದ ಮೇಲೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ, ಮಾಹಿತಿ ಕೋರಲಾಗಿತ್ತು.
ಪ್ರಾಚಾರ್ಯರು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿ ಫಾರ್ ಸಹಿಯೊಂದಿಗೆ ಹಿಂಬರಹ ನೀಡಲಾಗಿರುತ್ತದೆ. ಮಾಹಿತಿ ಅಧಿಕಾರಿ, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿರುವ ಫಾರ್ ಸಹಿಯೇ ಪ್ರಾಚಾರ್ಯರ ಹೆಸರಿನ ಪತ್ರದಲ್ಲಿ ನಮೂದಾಗಿರುತ್ತದೆ. ಸದರಿ ಸಂಸ್ಥೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಪ್ರಾಚಾರ್ಯರೇ ಆಗಿರುತ್ತಾರೆ.
ಹೀಗಿರುವಾಗ ಪಾಚಾರ್ಯರ ಮುದ್ರೆ ಇರುವಲ್ಲಿ ಫಾರ್ ಎಂಬುದಾಗಿ ನಮೂದಿಸಿ ಸಹಿ ಮಾಡಿ, ಮಾಹಿತಿ ಅಧಿಕಾರಿ ಎಂಬ ಮುದ್ರೆಗೆ ಫಾರ್ ಬಳಸದೆ ಸಹಿ ಮಾಡಿರುವುದು ಹಲವು ಅನುಮಾನಕ್ಕೆ ಕಾರಣವಾಗಿ ಈ ಬಗ್ಗೆ ತನಿಖೆ ನಡೆಸುವಂತೆ ಜಂಟಿ ನಿರ್ದೇಶಕರಿಗೆ ದೂರು ನೀಡಲಾಗಿತ್ತು.
ಆದರೆ ಜಂಟಿ ನಿರ್ದೇಶಕರು, ಕೌಶಲ್ಯ ಅಭಿವೃದ್ದಿ ಮತ್ತು ಉದ್ಯೋಗ ಇಲಾಖೆ, ಹುಬ್ಬಳ್ಳಿ ಇವರಿಗೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಂಡ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿತ್ರದುರ್ಗ | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಮರ್ನಾಥ್ ಜೈನ್ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಿತ್ರದುರ್ಗ ಜಿಲ್ಲೆಯ 6 ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಇಲಾಖಾ ತನಿಖೆ ನಡೆಸದೆ ಕಾಲ ವಿಳಂಬ ಮಾಡುತ್ತಿರುವ ಚಿತ್ರದುರ್ಗ ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಅಮರ್ನಾಥ್ ಜೈನ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ 06 ಅರ್ಜಿ ಸಲ್ಲಿಸಿ, ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಉಪವಿಭಾಗಗಳಿಗೆ ಬಿಡುಗಡೆಯಾದ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿದ್ದರು.
ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ಸದರಿ ಪ್ರಕರಣವನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿದ್ದರು.
ನಿಯಮಾನುಸಾರ ಇಲಾಖೆ ತನಿಖೆ ನಡೆಸದೆ ಕಾಲ ವಿಳಂಬ ಮಾಡುವ ಉದ್ದೇಶದಿಂದ 6 ತಾಲ್ಲೂಕು ಉಪ ವಿಭಾಗಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯುವಂತೆ ಆದೇಶ ಹೊರಡಿದ್ದು, ಇದರಂತೆ ವಕೀಲ ಡಾ.ಕೆ.ಎ.ಓಬಳಪ್ಪ ಇವರು ಎಲ್ಲಾ ಉಪವಿಭಾಗಗಳಿಗೆ ಭೇಟಿ ನೀಡಿ ದಾಖಲೆ ಪರಿಶೀಲನೆ ಮಾಡಿದಾಗ ದಾಖಲೆಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ.
ಈ ಬಗ್ಗೆ ಕಾರ್ಯಪಾಲಕ ಅಭಿಯಂತರರಿಗೆ ದೂರು ನೀಡಿದರೂ ನಿರ್ಲಕ್ಷö್ಯ ತೋರಿದ ಕಾರಣ, ಕರ್ತವ್ಯ ಲೋಪದ ಅಡಿಯಲ್ಲಿ ಕಾರ್ಯಪಾಲಕ ಅಭಿಯಂತರರಾದ ಅಮರ್ನಾಥ್ ಜೈನ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoಚಿತ್ರದುರ್ಗ | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಮರ್ನಾಥ್ ಜೈನ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

