Connect with us

ದಿನದ ಸುದ್ದಿ

ದಾವಣಗೆರೆ | ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ ವಿಧಿಸಿ ; ಮಡಿವಾಳ ಮಾಚಿದೇವ ಸಂಘ ಆಗ್ರಹ

Published

on

ಸುದ್ದಿದಿನ,ದಾವಣಗೆರೆ: ರಾಜ್ಯದಲ್ಲಿ ನಡೆದ ಕೊಪ್ಪಳ ಜಿಲ್ಲಾ ಕಿನ್ನಾಳ ಗ್ರಾಮದ ಅಪ್ರಾಪ್ತೆ ಬಾಲಕಿ ಅನುಶ್ರೀ ಮೇಲಿನ ವಾಮಾಚಾರದ ಬಲಿ, ಹುಬ್ಬಳ್ಳಿ ನಗರದ ನೇಹಾ ಹಿರೇಮರ್ ಮತ್ತು ಅಂಜಲಿ ಅಂಬಿಗರ ಇವರನ್ನು ಹತ್ತೆಗೈದ ಆರೋಪಿಗಳನ್ನು ಹಾಗೂ ಕಲಬುರ್ಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ದೇವನೂರು ಗ್ರಾಮದ ಅರ್ಜುನಪ್ಪ ಹಣಮಂತನ ಮೇಲೆ ಹಲ್ಲೆ ಮಾಡಿರುವ ಹಲ್ಲೇಕೋರರನ್ನು ಗಲ್ಲು ಶಿಕ್ಷೆಗೆ ಗುರಿ ಪಡಿಸಲು ಒತ್ತಾಯಿಸಿ ದಾವಣಗೆರೆ ಜಿಲ್ಲಾ ಮಡಿವಾಳ ಮಾಚಿದೇವ ಸಂಘವು ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿತು.

ನಗರದ ಜಯದೇವ ವೃತ್ತದಿಂದ ದಾವಣಗೆರೆ ಉಪ ವಿಭಾಗಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಉಪ ವಿಭಾಗಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದ ಮಡಿವಾಳ ಸಮುದಾಯದ ಪದಾಧಿಕಾರಿಗಳು ರಾಜ್ಯದ ಮುಖ್ಯ ಮಂತ್ರಿಗಳಿಗೆ ರವಾನಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಕಾರ್ಯಾಧ್ಯಕ್ಷ ಹೆಚ್.ಜಿ.ಉಮೇಶ್, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕಾನೂನು ಸುವ್ಯವಸ್ಥೆ ಹದಗೆಡುತ್ತಿದ್ದು, ಅತ್ಯಾಚಾರ, ಕೊಲೆಯಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಕೊಪ್ಪಳ ಜಿಲ್ಲಾ ಕಿನ್ನಾಳ ಗ್ರಾಮದ ಅಪ್ರಾಪ್ತೆ ಬಾಲಕಿ ಅನುಶ್ರೀ ಮೇಲೆ ವಾಮಾಚಾರ ಮಾಡಿ, ಆಕೆಯನ್ನು ಕತ್ತು ಕೊಯ್ದು ಅಮಾನುಷವಾಗಿ ಕೊಲೆ ಮಾಡಲಾಗಿದೆ. ಅದರಲ್ಲೂ ಮಹಿಳೆಯರ ಮೇಲಿನ ದೌರ್ಜನ್ಯ, ಹತ್ಯೆ ಹೆಚ್ಚಾಗುತ್ತಿವೆ. ಪ್ರೀತಿಯ ಹೆಸರಿನಲ್ಲಿ ಹುಬ್ಬಳ್ಳಿಯ ನೇಹಾ ಹಿರೇಮಠ್ ಅವರನ್ನು ಕಾಲೇಜು ಆವರಣದಲ್ಲಿ ದುಷ್ಕರ್ಮಿ ಫಯಾಜ್ ಹಲವಾರು ಬಾರಿ ಚಾಕುವಿನಿಂದ ಇರಿದುಕೊಲೆ ಮಾಡಿದ್ದು, ಇಡೀ ರಾಜ್ಯವೇ ಭಯಪಡುವಂತಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಇದಲ್ಲದೇ ಹುಬ್ಬಳ್ಳಿಯಲ್ಲೇ ವಿಶ್ವ ಎಂಬಾತ ಅಂಜಲಿ ಅಂಬಿಗರ ಎನ್ನುವ ಯುವತಿಯನ್ನು ಕೊಲೆ ಮಾಡಿ, ಪರಾರಿಯಾಗುವ ವೇಳೆ ದಾವಣಗೆರೆ ಸಮೀಪದ ಮಾಯಕೊಂಡ ರೈಲ್ವೆ ನಿಲ್ಧಾಣದಲ್ಲಿ ಮಹಿಳೆಯೊಬ್ಬಳ ಮೇಲೆ ಹತ್ಯೆಗೆ ಯತ್ನಿಸಿ, ಪ್ರಯಾಣಿಕರ ಸಹಕಾರದಿಂದ ರೈಲ್ವೆ ಪೊಲೀಸರಿಗೆ ಸಿಕ್ಕು ಬಿದ್ದಿದ್ದು, ಇದೀಗ ಪ್ರಕರಣ ತನಿಖೆ ನಡೆಯುತ್ತಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಬಳಿಯ ಕುಂಬಾರಗಡಿಗೆ ಗ್ರಾಮದಲ್ಲಿ ಕೆಲ ದಿನಗಳ ಹಿಂದೆ ಎಸ್‌ಎಸ್‌ಎಲ್ಸಿ ವಿದ್ಯಾರ್ಥಿನಿ ಮೀನಾ ಕೊಲೆ ನಡೆದಿತ್ತು. ನಂತರ ಪೊಲೀಸರು ಆರೋಪಿಯನ್ನು ಬಂಧಿಸಿ, ತನಿಖೆ ನಡೆಸುತ್ತಿದ್ದಾರೆ. ಇದೇ ರೀತಿ ರಾಜ್ಯದಲ್ಲಿ ಹಲವಾರು ಹಲ್ಲೆ, ಅತ್ಯಾಚಾರ, ಹತ್ಯೆಯಂತಹ ಪ್ರಕರಣಗಳು ಪದೇಪದೇ ನಡೆಯುತ್ತಿದ್ದರೂ ಸಹ ರಾಜ್ಯದ ಗೃಹ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದರು.

ಕಲಬುರುಗಿ ಜಿಲ್ಲೆಯ ಸೇಡಂ ತಾಲೂಕಿನ ದೇವನೂರು ಗ್ರಾಮದಲ್ಲಿ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಾಡಿ ಜೀವನ ನಡೆಸುತ್ತಿದ್ದ ಅರ್ಜುನ್ ಹಣುಮಂತಪ್ಪ, ಮಹಮ್ಮದ್ ಸಮೀರುದ್ದೀನ್, ಅಬ್ದುಲ್ ರೆಹಮಾನ್ ಎಂಬಾತರನ್ನು ಕೊಠಡಿಯೊಂದರಲ್ಲಿ ಕೂಡಿ ಹಾಕಿದ್ದಲ್ಲದೇ ಅವರನ್ನು ವಿವಸ್ತçಗೊಳಿಸಿ, ಗುಪ್ತಾಂಗಕ್ಕೆ ಬಾಟರಿಯಿಂದ ಕರೆಂಟ್ ಶಾಕ್ ನೀಡಿದ ಪ್ರಕರಣ ದಾಖಲಾಗಿದೆ. ಈ ಘಟನೆಯ ವಿಡಿಯೋ ತುಣುಕುಗಳು ರಾಜ್ಯದೆಲ್ಲೆಡೆ ಹರಿದಾಡುತ್ತಿದ್ದು, ಅಮಾನವಿಯವಾದ ರೀತಿಯಲ್ಲಿ ನಡೆದುಕೊಂಡ ಆರೋಪಿಗಳನ್ನು ಕಲಬುರುಗಿಯ ವಿಶ್ವವಿದ್ಯಾನಿಲಯ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಇದೇ ರೀತಿ ರಾಜ್ಯದಲ್ಲಿ ಹಲ್ಲೇ, ದೌರ್ಜನ್ಯ, ಅತ್ಯಾಚಾರ, ಕೊಲೆಯಂತಹ ಪ್ರಕರಣಗಳು ನಡೆಯುತ್ತಿದ್ದು, ರಾಜ್ಯದ ಜನರನ್ನು ಭಯಬೀತರನ್ನಾಗಿ ಮಾಡಿದೆ. ಅದರಲ್ಲೂ, ಯುವತಿಯರು ಮಹಿಳೆಯರು ಮನೆಯಿಂದ ಹೊರಗೆ ಹೋಗಲು ಹೆದರುವ ವಾತಾವರಣ ಸೃಷ್ಟಿಯಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ಗೃಹ ಇಲಾಖೆ ಸೂಕ್ತ ರೀತಿಯಲ್ಲಿ ಕಠಿಣ ಕ್ರಮ ಕೈಗೊಳ್ಳುವ ಜೊತೆಯಲ್ಲಿ ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳು ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಬೇಕು. ಇದಲ್ಲದೇ ಈ ಎಲ್ಲಾ ಪ್ರಕರಣಗಳಲ್ಲಿ ಅಮಾನವೀಯ, ವಿಕೃತವಾಗಿ ವರ್ತನೆ ಮಾಡಿರುವ ಎಲ್ಲಾ ಆರೋಪಿಗಳನ್ನು ಗಲ್ಲು ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಹುಲಿಕಟ್ಟೆ ರಾಮಚಂದ್ರಪ್ಪ, ಎಂ.ವೈ.ಸತೀಶ್, ಜಿ.ಕಿಶೋರ್ ಕುಮಾರ್, ಆರ್.ಎನ್.ಮಾರುತಿ, ಅಂಜಿನಪ್ಪ ಪೂಜಾರ್, ಜಿ.ವಿಜಯ ಕುಮಾರ್, ಹನುಮಂತಪ್ಪ, ಕಕ್ಕರಗೊಳ್ಳ ಮಂಜುನಾಥ್, ಅಣಜಿ ಹನುಮಂತಪ್ಪ, ಐಗೂರು ಅಂಜಿನಪ್ಪ, ಅರಸೀಕೆರೆ ಬಸವರಾಜ್, ರವಿ ಚಿಕ್ಕಣ್ಣ, ಮಧುರಾ, ನಾಗಮ್ಮ, ಡೈಮಂಡ್ ಮಂಜುನಾಥ್, ಗೋಪಾಲ್, ಕೃಷ್ಣಮೂರ್ತಿ, ರವಿ, ಬಾತಿ ಶಂಕರ್, ಸುಭಾಷ್, ರಾಜಣ್ಣ, ಎಂ.ಕೆ.ಬಸವರಾಜ್ ಇತರರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲ ಇವರ ಮಗ ಮೊಹಮ್ಮದ್ ಮುಬಾರಕ್ @ ಮುಬಾರಕ್ ಈತ ಮತ್ತು ನಿಸಾರ್ ಅಹಮದ್ ಬಿನ್ ಮಹಮ್ಮದ್ ಅಬಿದ್ ಮತ್ತು ಇನ್ನೊಬ್ಬರು, ಬೇತೂರು ರೋಡ್, ಸಿದ್ಧರಾಮೇಶ್ವರ ಬಡಾವಣೆ ಇವರು ತಮ್ಮ ಮಗ ತಾಜು @ ತಾಜುದ್ದೀನ್ ಇವರು ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜಾಡುವ ಸಂಧರ್ಭದಲ್ಲಿ ಮರಣ ಹೊಂದಿರುತ್ತಾರೆ.

ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 4ನೇ ಎದುರುದಾರರಾದ ಸದಾನಂದ ವಗಲೆ ಹಾಗೂ 1 ರಿಂದ 3ನೇ ಎದುರುದಾರರ ವಿರುದ್ಧ, ತಮ್ಮ ಸೇವೆಯಲ್ಲಿನ ನಿರ್ಲಕ್ಷತೆಯಿಂದ ಘಟನೆ ಸಂಭವಿಸಿದ್ದು ಎಂಬ ತೀರ್ಮಾನಕ್ಕೆ ಆಯೋಗವು ಬಂದಿದ್ದು, ಈಗಾಗಲೇ, 1 ರಿಂದ 3ನೇ ಎದುರುದಾರರು, ದೂರುದಾರರಿಗೆ ರೂ.500,000/- ಲಕ್ಷವನ್ನು ಪರಿಹಾರವಾಗಿ ಈಗಾಗಲೆ ಕೊಟ್ಟಿದ್ದು, ಆದ್ದರಿಂದ 1 ರಿಂದ 3ನೇ ಎದುರುದಾರರ ವಿರುದ್ಧ ಪ್ರಕರಣವನ್ನು ವಜಾ ಮಾಡಿದೆ.

4ನೇ ಎದುರುದಾರರಾದ ಸದಾನಂದ ವಗಲೆ, ಕಾಂಟ್ರಕ್ಟರ್, ಇವರು ಈ ಎರಡು ಪ್ರಕರಣದ ದೂರುದಾರರಿಗೆ ಆದೇಶಿಸಿದ ದಿನದಿಂದ ಒಂದು ತಿಂಗಳೊಳಗೆ ಆದೇಶದ ಪ್ರಕಾರ ಪಾವತಿಸುವಂತೆ ಮೇ.19 ರಂದು ಆದೇಶಿಸಿ ರೂ. 5 ಲಕ್ಷಗಳನ್ನು ಶೇಕಡಾ 6 ವಾರ್ಷಿಕ ಬಡ್ಡಿಯೊಂದಿಗೆ ಹಾಗೂ ದೂರು ಖರ್ಚು ಹಾಗೂ ಮಾನಸಿಕ ಯಾತನೆಗೆ ತಲಾ ರೂ.5 ಸಾವಿರದಂತೆ, ಒಟ್ಟು ರೂ.10,000/-ಗಳನ್ನು ಪರಿಹಾರ ರೂಪವಾಗಿ ದೂರುದಾರರಿಗೆ ನೀಡುವಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪ್ರತ್ಯೇಕವಾಗಿ ಪಾವತಿಸುವಂತೆ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಹೆಚ್.ಎನ್.ಮೀನಾ ಮತ್ತು ಸದಸ್ಯರಾದ ಸಿ.ಎಸ್. ತ್ಯಾಗರಾಜನ್ ಆದೇಶಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸ್ವಾಮಿ ವಿವೇಕಾನಂದರ ಚಿಂತನೆಗಳಿಂದ ಯುವಜನತೆಗೆ ಪ್ರೇರಣೆ ; ವಿಶ್ವನಾಥ.ಡಿ. ಅರ್

Published

on

ಸುದ್ದಿದಿನ,ಬನ್ನಿಕೋಡು:ಮಾ.ಸ.ಬ. ಕಾಲೇಜ್, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್‌.ಎಸ್‌.ಎಸ್‌. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಎರಡನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ. ರಂಗಸ್ವಾಮಿ ಟಿ.ಆರ್. ವಹಿಸಿ, ವಿದ್ಯಾರ್ಥಿಗಳಿಗೆ ಲಭ್ಯವಾಗಿರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ವಿಶೇಷ ಉಪನ್ಯಾಸದಲ್ಲಿ ಶ್ರೀ ವಿಶ್ವನಾಥ್ ಡಿ.ಆರ್., ಉಪನ್ಯಾಸಕರು ಹಾಗೂ ಪತ್ರಿಕಾ ವರದಿಗಾರರು, ಕೆ. ಬೇವಿನಹಳ್ಳಿ ಅವರು “ಸ್ವಾಮಿ ವಿವೇಕಾನಂದ ಮತ್ತು ಯುವಜನತೆ” ವಿಷಯದ ಕುರಿತು ಪ್ರೇರಣಾದಾಯಕ ಉಪನ್ಯಾಸ ನೀಡಿದರು. ಸ್ವಾಮಿ ವಿವೇಕಾನಂದರ ಜೀವನ ಸಾಧನೆ, ವ್ಯಕ್ತಿತ್ವ ಹಾಗೂ ದೇಶಭಕ್ತಿ ಕುರಿತು ವಿವರಿಸಿ, ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಅನುಸರಿಸಿ ಉತ್ತಮ ಆಚಾರ-ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಯುವಜನತೆ ತಮ್ಮ ಶಕ್ತಿಯನ್ನು ಸಮಾಜಸೇವೆ ಹಾಗೂ ದೇಶದ ಅಭಿವೃದ್ಧಿಗೆ ಬಳಸಬೇಕು ಎಂದು ಕರೆ ನೀಡಿದರು.

“ಎದ್ದು ನಿಲ್ಲಿ, ಜಾಗ್ರತವಾಗಿರಿ, ಗುರಿ ಸಾಧಿಸುವ ತನಕ ನಿಲ್ಲಬೇಡಿ” ಎಂಬ ಸ್ವಾಮಿ ವಿವೇಕಾನಂದರ ಅಮೂಲ್ಯ ವಾಕ್ಯವನ್ನು ಉಲ್ಲೇಖಿಸಿ, ಯುವಕರಲ್ಲಿ ಆತ್ಮವಿಶ್ವಾಸ ಮತ್ತು ಗುರಿನಿಷ್ಠೆ ಬೆಳೆಸುವಂತೆ ಪ್ರೇರೇಪಿಸಿದರು.

ಶ್ರೀ ಎ. ಜಯಪ್ಪ ಅವರು ಎನ್‌.ಎಸ್‌.ಎಸ್‌. ಕಾರ್ಯಚಟುವಟಿಕೆಗಳು ಸಮಾಜಸೇವೆ ಹಾಗೂ ಸಾಮಾಜಿಕ ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.

ಶ್ರೀ ಪಿ.ವಿ. ಸತೀಶ್ ಅವರು ಹಳ್ಳಿ ಜೀವನದ ಮಹತ್ವ ಹಾಗೂ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಿದರು.

ಉಪನ್ಯಾಸಕಿ ಕಾವ್ಯ ಶ್ರೀ ಅವರು ಮಹಿಳಾ ಸಬಲೀಕರಣದ ಕುರಿತು ಮಾತನಾಡಿ, ಮಹಿಳೆಯರು ಶಿಕ್ಷಣ ಹಾಗೂ ಆತ್ಮವಿಶ್ವಾಸದಿಂದ ಸಮಾಜದಲ್ಲಿ ತಮ್ಮದೇ ಆದ ಸ್ಥಾನಮಾನವನ್ನು ಪಡೆಯಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು ಹಾಗೂ ಮುಖಂಡರಾದ ವಾಗೀಶ್ ಸುದರ್ಶನ ಎಸ್.ಸಿ., ವಿಜಯ, ಹನುಮಂತಪ್ಪ ಯು., ಕೆ.ಎಸ್‌. ಬಸವರಾಜು, ಕೆ. ರೇವಣಸಿದ್ಧಪ್ಪ ಮುಂತಾದವರು ಭಾಗವಹಿಸಿದ್ದರು.

ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಹಾಗೂ ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್ ಹಾಗೂ ಉಪನ್ಯಾಸಕರಾದ ಶ್ರೀ ಶಾಂತಕುಮಾರ್ ಉಪಸ್ಥಿತರಿದ್ದರು.

ವೇದಿಕೆ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಮೂಲಕ ಎರಡನೇ ದಿನದ ಶಿಬಿರವು ಮುಕ್ತಾಯಗೊಂಡಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಲೋಕಾಯುಕ್ತ ಪೋಲಿಸ್ ಇನ್ಸ್‌ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು

Published

on

ಸುದ್ದಿದಿನ,ಬನ್ನಿಕೋಡು: ಮಾ.ಸ.ಬ. ಕಾಲೇಜು, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್‌.ಎಸ್‌.ಎಸ್‌. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಅಧ್ಯಕ್ಷತೆಯನ್ನು ಮಾ.ಸ.ಬ. ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ವಿಜಯಕುಮಾರ್ ಎ.ಬಿ. ವಹಿಸಿದ್ದರು.

ಮುಖ್ಯ ಉಪನ್ಯಾಸಕರಾಗಿ ಕರ್ನಾಟಕ ಲೋಕಾಯುಕ್ತ, ದಾವಣಗೆರೆ ಇವರ ಪೋಲಿಸ್ ಇನ್ಸ್‌ಪೆಕ್ಟರ್ ಶ್ರೀ ಪ್ರಭು ಬಿ. ಸೂರಿನ ಭಾಗವಹಿಸಿ “ಕರ್ನಾಟಕ ಲೋಕಾಯುಕ್ತ ಕಾಯ್ದೆ ಮತ್ತು ಭ್ರಷ್ಟಾಚಾರ ನಿಗ್ರಹ ಕಾಯ್ದೆ” ಕುರಿತು ಸಮಗ್ರ ಮಾಹಿತಿ ನೀಡಿದರು. ಕರ್ನಾಟಕ ಲೋಕಾಯುಕ್ತದ ಸ್ಥಾಪನೆ ಮತ್ತು ಹಿನ್ನೆಲೆ, ಸಂಸ್ಥೆಯ ವ್ಯಾಪ್ತಿ, ದೂರು ಸಲ್ಲಿಸುವ ವಿಧಾನ, ವಿಚಾರಣೆ ಕ್ರಮ, ಭ್ರಷ್ಟಾಚಾರ ತಡೆ ಕಾಯ್ದೆಯ ಪ್ರಮುಖ ಅಂಶಗಳು, ಲೋಕಾಯುಕ್ತ ಸಂಸ್ಥೆಯ ವೈಶಿಷ್ಟ್ಯತೆಗಳು, ಹಗರಣಗಳ ತನಿಖಾ ವಿಧಾನ ಹಾಗೂ ಸರ್ಕಾರಿ ಹಣದ ದುರುಪಯೋಗ ತಡೆ ಕ್ರಮಗಳ ಬಗ್ಗೆ ವಿವರಿಸಿದರು. ಉಪನ್ಯಾಸದ ಅಂತ್ಯದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರ ನೀಡಿದರು.

ಜಿಲ್ಲಾ ನೋಡಲ್ ಅಧಿಕಾರಿಗಳಾದ ಡಾ. ಹೆಚ್.ಆರ್. ತಿಪ್ಪೇಸ್ವಾಮಿ ಅವರು ಯುವಜನತೆ ಹಾಗೂ ಸಾಮಾಜಿಕ ಸಾಮರಸ್ಯ ಕುರಿತು ಪ್ರೇರಣಾದಾಯಕ ಸಂದೇಶ ನೀಡಿದರು.

ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಮತ್ತು ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್, ಗ್ರಾಮದವರಾದ ಬಸವರಾಜ್, ಹಾಲಪ್ಪ, ಮಹದೇವಪ್ಪ, ಕುರಿಯರ್ ದುರುಗಪ್ಪ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಕಾನೂನು ಜಾಗೃತಿ ಹಾಗೂ ಭ್ರಷ್ಟಾಚಾರ ವಿರೋಧಿ ಮನೋಭಾವ ಬೆಳೆಸುವಲ್ಲಿ ಯಶಸ್ವಿಯಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending