ದಿನದ ಸುದ್ದಿ
ಬೆಳಗಿನ ಪ್ರಮುಖ ಸುದ್ದಿಗಳು
ಬೆಳಗಿನ ಪ್ರಮುಖ ಸುದ್ದಿಗಳು
- ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಿಂದ ಅಗ್ನಿಶಾಮಕ ಸೇವಾ ಸಪ್ತಾಹ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಅಗ್ನಿ ಅನಾಹುತಗಳನ್ನು ತಡೆಗಟ್ಟುವ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ಇಂದು ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮಹಾ ನಿರ್ದೇಶಕ ಡಾ: ಅಮರ್ ಕುಮಾರ್ ಪಾಂಡೆ ಮಧ್ಯಾಹ್ನ 12 ಗಂಟೆಗೆ ಕಬ್ಬನ್ಪಾರ್ಕ್ ಸಮೀಪವಿರುವ ಮಹಾತ್ಮ ಗಾಂಧಿ ವೃತ್ತದಲ್ಲಿ ಚಾಲನೆ ನೀಡಲಿದ್ದಾರೆ.
- ಮೈಸೂರು ವಿಭಾಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಇಂದು ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡಿ ಸಾರ್ವಜನಿಕರಿಂದ ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ನೀಡುವ ದೂರು ಮತ್ತು ಅಹವಾಲುಗಳ ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
- ಮೈಸೂರಿನ ಪಾರಂಪರಿಕ ದೇವರಾಜ ಮಾರುಕಟ್ಟೆ ಹಾಗೂ ಲ್ಯಾನ್ಸ್ ಡೌನ್ ಕಟ್ಟಡ ನೆಲಸಮ ವಿರೋಧಿಸಿ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
- ರಾಜ್ಯದಲ್ಲಿ ನಿನ್ನೆ 62ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಯಾವುದೇ ಮರಣ ಸಂಭವಿಸಿಲ್ಲ. ಬೆಂಗಳೂರು ನಗರದಲ್ಲಿ 57ಪ್ರಕರಣಗಳು ಪತ್ತೆಯಾಗಿದ್ದು, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗದಲ್ಲಿ 2 ಮತ್ತು ಮೈಸೂರಿನಲ್ಲಿ 1ಪ್ರಕರಣ ಪತ್ತೆಯಾಗಿದೆ. ಉಳಿದ 26ಜಿಲ್ಲೆಗಳಲ್ಲಿ ಯಾವುದೇ ಸೋಂಕು ಪ್ರಕರಣ ದೃಢಪಟ್ಟಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
- ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ವಿಧಾನಸಭಾ ಕ್ಷೇತ್ರದ ವಿವಿಧೆಡೆಯಲ್ಲಿ ಭಾರಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಸಚಿವ ಡಾ. ನಾರಾಯಣಗೌಡ ನಿನ್ನೆ ಭೇಟಿ ನೀಡಿ ಪರಿಶೀಲಿಸಿದರು. ಅಕ್ಕಿಹೆಬ್ಬಾಳು ಗ್ರಾಮದಲ್ಲಿ ಭಾರಿ ಮಳೆಗೆ ಸುಬ್ಬರಾಮ್ ಎಂಬುವರ ಮನೆ ಹಾನಿಗೊಳಗಾಗಿದ್ದು, ಸ್ಥಳದಲ್ಲೇ 25ಸಾವಿರ ರೂಪಾಯಿ ಚೆಕ್ ಹಾಗೂ 10 ಸಾವಿರ ರೂಪಾಯಿ ನಗದು ಪರಿಹಾರ ನೀಡಿದರು.
- ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಈ ತಿಂಗಳ 29ರಂದು ಬೆಂಗಳೂರಿನಲ್ಲಿ ಮೂರು ದಿನಗಳ ಸೆಮಿಕಾನ್ ಇಂಡಿಯಾ ಸಮ್ಮೇಳನ ಉದ್ಘಾಟಿಸಲಿದ್ದಾರೆ ಎಂದು ಎಲೆಕ್ಟ್ರಾನಿಕ್ಸ್ ಮಾಹಿತಿ ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243