ಕ್ರೀಡೆ
ಬೆಳಗಿನ ಪ್ರಮುಖ ಸುದ್ದಿಗಳು
ಬೆಳಗಿನ ಪ್ರಮುಖ ಸುದ್ದಿಗಳು
- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಚಿಕ್ಕಮಗಳೂರು ಜಿಲ್ಲಾ ಭೇಟಿ ಸಂದರ್ಭದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಹಾಗೂ 16 ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ತಿಳಿಸಿದ್ದಾರೆ.
- ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ ದಿನಾಚರಣೆಯನ್ನು ಇಂದು ಆಚರಿಸಲಾಗುತ್ತಿದ್ದು, ಕೇಂದ್ರ ಸಂಸ್ಕೃತಿ ಸಚಿವಾಲಯದಿಂದ ಬೆಂಗಳೂರಿನ ’ನ್ಯಾಷನಲ್ ಗ್ಯಾಲರಿ ಆಫ್ ಮಾಡರ್ನ್ ಆರ್ಟ್’ನಲ್ಲಿ ಇಂದು ಸಂಜೆ 6 ಗಂಟೆಗೆ ’ವಸ್ತು ಸಂಗ್ರಹಾಲಯದ ಶಕ್ತಿ’ ಕುರಿತ ವಿಚಾರಸಂಕಿರಣ ಆಯೋಜಿಸಲಾಗಿದೆ.
- ಕೇಂದ್ರ ಸರ್ಕಾರದ ಅಂಕಿ-ಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯದ ಗೃಹ ಬಳಕೆಯ ವೆಚ್ಚ ಸಮೀಕ್ಷೆ ಕುರಿತ 2 ದಿನಗಳ ತರಬೇತಿ ಕಾರ್ಯಾಗಾರ ಇಂದು ಬೆಂಗಳೂರಿನಲ್ಲಿ ಚಾಲನೆಯಾಗಲಿದೆ. ಜುಲೈ 1 ರಿಂದ ಒಂದು ವರ್ಷದ ಅವಧಿಗೆ ಸಮೀಕ್ಷೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
- ಡ್ರೋಣ್, ರೋಬೋಟಿಕ್ಸ್ ಸೇರಿದಂತೆ ಮುಂದುವರಿದ ತಂತ್ರಜ್ಞಾನದೊಂದಿಗೆ ರಕ್ಷಣಾ ಪಡೆಗಳನ್ನು ಬಲಪಡಿಸಲಾಗುತ್ತಿದೆ. ’ಆತ್ಮ ನಿರ್ಭರ್ ಭಾರತ್’ ಪರಿಕಲ್ಪನೆಯಡಿ ರಕ್ಷಣಾ ವಲಯದ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಲಾಗುತ್ತಿದೆ ಎಂದು ಎಂದು ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಕರೆ ನೀಡಿದ್ದಾರೆ.
- ಉತ್ತರಖಂಡದಲ್ಲಿ ಮೇ 3ರಿಂದ ಚಾರ್ಧಾಮ್ ಯಾತ್ರೆ ಆರಂಭಗೊಂಡಿದ್ದು, ಇದೂವರೆಗೆ 3ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಪಾಲ್ಗೊಂಡಿದ್ದಾರೆ. ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತಗಳು ಸತತವಾಗಿ ಯಾತ್ರೆಯ ನಿಗಾವಹಿಸುತ್ತಿವೆ. ಎಲ್ಲ ಯಾತ್ರಾರ್ಥಿಗಳು, ಯಾತ್ರೆಗೆ ಮುನ್ನ ಅಧಿಕೃತವಾಗಿ ನೋಂದಾಯಿಸಿಕೊಳ್ಳುವಂತೆ ಸರ್ಕಾರ ಸೂಚಿಸಿದೆ.
- ಚಲನಚಿತ್ರ ವಲಯದಲ್ಲಿ ಸುಗಮ ಉದ್ಯಮ ವಾತಾವರಣ ನಿರ್ಮಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಅಂತಾರಾಷ್ಟ್ರೀಯ ಚಲನಚಿತ್ರಗಳು ಮತ್ತು ವಿದೇಶಿ ಚಿತ್ರಗಳ ಸಹ-ನಿರ್ಮಾಣಕ್ಕೆ ಎಲ್ಲ ಸೌಲಭ್ಯ ಒದಗಿಸಲು ಹಾಗೂ ಸರ್ಕಾರಿ ಮಟ್ಟದ ವಿವಿಧ ಅನುಮತಿ ನೀಡಿಕೆಗೆ ಏಕಗವಾಕ್ಷಿ ವ್ಯವಸ್ಥೆ ರೂಪಿಸಲು ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದು ಪ್ರಧಾನಿ ವಿವರಿಸಿದರು.
- ರಾಜ್ಯದ ಕರಾವಳಿಯಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಗಾಳಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ತುರ್ತು ಸೇವೆಗೆ ಶುಲ್ಕರಹಿತ ದೂರವಾಣಿ ಸಂಖ್ಯೆ 1077ಹಾಗೂ ದೂರವಾಣಿ ಸಂಖ್ಯೆ08382-229857 ಮೊಬೈಲ್ ಸಂಖ್ಯೆ 9483511015 ಕ್ಕೆ ಸಂಪರ್ಕಿಸಲು ಜಿಲ್ಲಾಡಳಿತ ಕೋರಿದೆ.
- ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ ದಿನಾಚರಣೆಯನ್ನು ಇಂದು ಆಚರಿಸಲಾಗುತ್ತಿದ್ದು, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಧಾರವಾಡ ವಲಯದ ಕಾರ್ಯಕ್ರಮ ಐತಿಹಾಸಿಕ ಬಾದಾಮಿಯಲ್ಲಿ ಇಂದು ನಿಗದಿಯಾಗಿದೆ.
- ವಿಧಾನಸಭೆಯಿಂದ ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆಗೆ ನಿನ್ನೆ ಅಧಿಸೂಚನೆ ಹೊರಡಿಸಲಾಗಿದೆ. ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ. ನಾಮಪತ್ರ ಸಲ್ಲಿಸಲು ಇದೇ 24ರಂದು ಕೊನೆಯ ದಿನವಾಗಿದ್ದು, 25ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. 27ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿರುತ್ತದೆ. ಅಗತ್ಯ ಬಿದ್ದಲ್ಲಿ ಜೂನ್ 3ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನಕ್ಕೆ ಅವಕಾಶವಿರುತ್ತದೆ. 5 ಗಂಟೆಯ ನಂತರ ಮತಗಳ ಎಣಿಕೆ ನಡೆದು ಅಂದೇ ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.
- ನೌಕಾ ವಲಯದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದ್ದು, ಭಾರತೀಯ ನೌಕಾಪಡೆಗಳೊಂದಿಗೆ ಜಂಟಿ ಕಾರ್ಯ ನಿರ್ವಹಿಸಲು ಅಮೆರಿಕ ಉತ್ಸುಕವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದರು.
- ಭಾರತವು ಜಗತ್ತಿನಲ್ಲೇ ಅತಿ ಹೆಚ್ಚು ಸಂಖ್ಯೆಯಲ್ಲಿ ಚಲನಚಿತ್ರಗಳನ್ನು ನಿರ್ಮಿಸುತ್ತಿದ್ದು, ಭಾರತೀಯ ಚಿತ್ರೋದ್ಯಮ ಶ್ರೀಮಂತ ಪರಂಪರೆ ಮತ್ತು ಸಾಂಸ್ಕೃತಿಕ ವೈವಿಧ್ಯತೆಯನ್ನು ಹೊಂದಿದೆ. ಭಾರತದಲ್ಲಿ ಅಸಂಖ್ಯಾತ ಕಥೆಗಳಿದ್ದು, ಇದು ಜಾಗತಿಕ ಕಥಾ ಕಣಜವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
- ಬ್ಯಾಂಕಾಕ್ ನಲ್ಲಿ ಇತ್ತೀಚೆಗೆ ನಡೆದ ಥಾಮಸ್ ಕಪ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಜಯಗಳಿಸಿದ ಭಾರತೀಯ ತಂಡದ ಆಟಗಾರ ಹಾಗೂ ಬೆಂಗಳೂರಿನಲ್ಲಿ ತರಬೇತಿ ಪಡೆದಿರುವ ಲಕ್ಷ್ಯ ಸೇನ್ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 5ಲಕ್ಷ ರೂಪಾಯಿ ಬಹುಮಾನದ ಚೆಕ್ ನ್ನು ನಿನ್ನೆ ಪ್ರದಾನ ಮಾಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಕ್ರೀಡಾ ಸಚಿವ ಕೆ.ಸಿ. ನಾರಾಯಣ ಗೌಡ ಉಪಸ್ಥಿತರಿದ್ದರು.
- ಕೇರಳದಲ್ಲಿ ಭಾರೀ ಮಳೆ ಮುಂದುವರಿದಿದ್ದು, 9 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಮಲಪ್ಪುರಂ, ಪಾಲಕ್ಕಾಡ್, ಕೋಳಿಕೋಡ್, ವೈನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 3 ದಿನಗಳಲ್ಲಿ ಗುಡುಗುಸಹಿತ ಭಾರೀ ಮಳೆ ಮುಂದುವರಿಯಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.
- ರಾಜ್ಯಾದ್ಯಂತ ನಿನ್ನೆ ರಾತ್ರಿ ಧಾರಾಕಾರ ಮಳೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಗುಡುಗುಸಹಿತ ಮಳೆಯಾಗಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ವಾಹನ ಸಂಚಾರ, ಜನಜೀವನವನ್ನು ಅಸ್ತವ್ಯಸ್ಥಗೊಂಡಿದೆ. ಹಳೆ ಮೈಸೂರು ಭಾಗದ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದ್ದು, ಕೃಷಿ ಚಟುವಟಿಕೆಗಳು ಗರಿಗೆದರಿವೆ.
- ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ6 ಸಾವಿರದ500 ಕ್ಕೂ ಹೆಚ್ಚು ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಶಾಲೆಗಳನ್ನು ಗುರುತಿಸಿ, ಆಗಸ್ಟ್ನಿಂದ ಕಾಮಗಾರಿ ಪ್ರಾರಂಭಿಸುವಂತೆ ಅಧಿಕಾರಿಗಳಿಗೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.
- ಲಂಡನ್ ನಲ್ಲಿ ಇದೇ 19ರಂದು ನಡೆಯಲಿರುವ ಕಾಮನ್ವೆಲ್ತ್ ರಾಷ್ಟ್ರಗಳ ಶಿಕ್ಷಣ ಸಮಾವೇಶ ಹಾಗೂ ಇದೇ 26ರಿಂದ ದಾವೋಸ್ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ಸಮಾವೇಶದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಪಾಲ್ಗೊಳ್ಳಲಿದ್ದಾರೆ.
- ನಗರದ ಸುಗಮ ಸಂಚಾರ ವ್ಯವಸ್ಥೆಗೆ ಟೋಯಿಂಗ್ ಅಗತ್ಯವಿದೆ. ಸರ್ಕಾರದೊಂದಿಗೆ ಚರ್ಚಿಸಿ ಪರಿಷ್ಕೃತ ನಿಯಮಗಳ ರೂಪಿಸಿ ಟೋಯಿಂಗ್ ವ್ಯವಸ್ಥೆ ಮರುಜಾರಿಗೆ ಪ್ರಯತ್ನಿಸಲಾಗುವುದು ಎಂದು ನೂತನ ಬೆಂಗಳೂರು ಪೊಲೀಸ್ ಆಯುಕ್ತ ಪ್ರಥಾಪ್ ರೆಡ್ಡಿ ಹೇಳಿದ್ದಾರೆ.
- ಅಸ್ಸಾಂನ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಕುರಿತು ಗೃಹ ಸಚಿವ ಅಮಿತ್ ಶಾ ಕಳವಳ ವ್ಯಕ್ತ ಪಡಿಸಿದ್ದಾರೆ. ಅವರು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರೊಂದಿಗೆ ಪರಿಸ್ಥಿತಿ ಅವಲೋಕನ ನಡೆಸಿದ್ದಾರೆ. ಕೇಂದ್ರ ಸರ್ಕಾರದಿಂದ ಸಾಧ್ಯವಿರುವ ಎಲ್ಲ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ ಮತ್ತು ಈಗಾಗಲೇ ಎನ್ ಡಿ ಆರ್ ಎಫ್ ತಂಡಗಳನ್ನು ನಿಯೋಜಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
- ಮುಸ್ಲಿಮರ ಪ್ರವೇಶ ಮತ್ತು ಪೂಜೆಯ ಹಕ್ಕಿಗೆ ಅಡ್ಡಿಯಾಗದಂತೆ ಶಿವಲಿಂಗ ಪತ್ತೆಯಾದ ಪ್ರದೇಶವನ್ನು ರಕ್ಷಿಸುವಂತೆ ಸುಪ್ರೀಂ ಕೋರ್ಟ್ ವಾರಣಾಸಿ ಜಿಲ್ಲಾ ಮ್ಯಾಜಿಸ್ಟ್ರೇಟ್ಗೆ ಸೂಚಿಸಿದೆ. ಅಲ್ಲದೆ, ಈ ವಿಷಯವನ್ನು ನಾಳೆ ಮತ್ತೆ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ. ಈ ಮಧ್ಯೆ, ಜ್ಞಾನವಾಪಿ ಮಸೀದಿಯ ಒಳಭಾಗದ ವಿಡಿಯೊ ಸಮೀಕ್ಷೆಗಾಗಿ ನೇಮಿಸಲಾಗಿದ್ದ ಕಮಿಷನರ್ ಅಜಯ್ ಕುಮಾರ್ ಮಿಶ್ರಾರನ್ನು ವಾರಾಣಸಿ ನ್ಯಾಯಾಲಯ ವಜಾಗೊಳಿಸಿದೆ.
- ದೇಶದಲ್ಲಿ ಕೋವಿಡ್ ಲಸಿಕೆ ನೀಡಿಕೆ ವ್ಯಾಪ್ತ 191 ಕೋಟಿ ೬೩ ಲಕ್ಷ ಗಡಿ ದಾಟಿದೆ. ನಿನ್ನೆ 13 ಲಕ್ಷಕ್ಕೂ ಹೆಚ್ಚು ಲಸಿಕೆಗಳನ್ನು ನೀಡಲಾಯಿತು. ಇದುವರೆಗೆ 13ರಿಂದ 14 ವರ್ಷ ವಯಸ್ಸಿನ ಮಕ್ಕಳಿಗೆ 4 ಕೋಟಿ 47 ಲಕ್ಷಕ್ಕೂ ಹೆಚ್ಚು ಲಸಿಕೆ ಡೋಸ್ಗಳನ್ನು ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243