ಲೈಫ್ ಸ್ಟೈಲ್
ಮಲೇರಿಯಾ: ಮುಂಜಾಗೃತೆ ಅನಿವಾರ್ಯ
ಮಲೇರಿಯಾ ಎಂದ ಕೂಡಲೇ ನೆನಪಾಗುವುದು ಸೊಳ್ಳೆಗಳಿಂದ ಹರಡುವ ರೋಗ. ಹೀಗಂತ ಬಹುತೇಕ ಯಾವ ಹಳ್ಳಿಯ ಕಟ್ಟಕಡೆಯ ವ್ಯಕ್ತಿಗೂ ಇದು ಅರಿವಿದೆ ಎಂದುಕೊಳ್ಳುತ್ತೇನೆ. ಈ ಬೇಸಿಗೆಯಲ್ಲಿ ಇದ್ಯಾವ ಮಲೇರಿಯಾ ಬಗ್ಗೆ ಹೇಳಹೊರಟಿದ್ದೀರಲ್ಲ ಎಂದುಕೊಳ್ಳಬೇಡಿ. ಇಂದು ಮಲೇರಿಯಾಕ್ಕಾಗಿ ಒಂದು ಮುಂಜಾಗೃತಿಯ ಹೆಜ್ಜೆ ಇಡುವ ದಿನ, ‘ವಿಶ್ವ ಮಲೇರಿಯಾ ದಿನ’.
ಪ್ರತಿವರ್ಷ ಏಪ್ರಿಲ್ 25ರಂದು ‘ವಿಶ್ವ ಮಲೇರಿಯಾ ದಿನ’ ಎಂದು ಆಚರಿಸಲಾಗುತ್ತದೆ.
ಇದಲ್ಲದೇ ಮೇ 1 -7 ನ್ನು ‘ಮಲೇರಿಯಾ ವಿರೋಧಿ ವಾರ’ ಹಾಗೂ ಜೂನ್ 1-30 ನ್ನು ‘ಮಲೇರಿಯಾ ವಿರೋಧಿ ತಿಂಗಳು’ ಎಂಬುದೂ ಆರೋಗ್ಯ ಇಲಾಖೆಯಲ್ಲಿ ಆಚರಣೆಯಲ್ಲಿ ಇದೆ. ಇದಕ್ಕೆಲ್ಲಾ ಕಾರಣ ಇಷ್ಟೆ, ಈ ರೋಗವು ಮಳೆಗಾಲದಲ್ಲಿ ನೀರು ಎಲ್ಲಿಬೇಕಲ್ಲಿ ನಿಂತುಕೊಂಡು ಜುಲೈ ನಿಂದ ನವೆಂಬರ್ ತಿಂಗಳವರೆಗೆ ಮಲೇರಿಯಾಕ್ಕೆ ಬೇಕಿರುವ ಸೊಳ್ಳೆಗಳ ಅತಿ ಹೆಚ್ಚು ಉತ್ಪತ್ತಿಗೆ ಕಾರಣವಾಗುತ್ತದೆ. ಒಬ್ಬ ವ್ಯಕ್ತಿ ಮಲೇರಿಯಾಕ್ಕೆ ತುತ್ತಾದರೆ, ಕ್ರಮೇಣ ಸೊಳ್ಳೆಗಳ ಉತ್ಪತ್ತಿ ಜಾಸ್ತಿಯಾದಂತೆ ಮಲೇರಿಯಾ ಹರಡುವಿಕೆಯೂ ಜಾಸ್ತಿಯಾಗುತ್ತದೆ. ಆದರೆ ಅವೆಲ್ಲದಕ್ಕೂ ಮೊದಲೇ ಜನರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಿದರೆ ಮಲೇರಿಯಾ ದಿಂದ ನರಳುವಿಕೆಯ ಪ್ರಮಾಣ ಕಡಿಮೆಯಾಗುವುದೆಂಬ ಉದ್ದೇಶವಿದೆ.
ಮಲೇರಿಯಾ ರೋಗವು ಪ್ಲಾಸ್ಮೋಡಿಯಮ್ ಎಂಬ ಪರಾವಲಂಬಿ ಸೂಕ್ಷ್ಮಾಣುಜೀವಿಯಿಂದ ಸೋಂಕಿತವಾದ ಅನಾಫಿಲಿಸ್ ಎಂಬ ಹೆಣ್ಣು ಸೊಳ್ಳೆಯ ಮೂಲಕ ಬರುತ್ತದೆ. ಸೋಂಕಿತ ಸೊಳ್ಳೆಯು ತನ್ನ ದೇಹದಲ್ಲಿ ಮಲೇರಿಯಾಕ್ಕೆ ಕಾರಣವಾಗಿರುವ ಸೂಕ್ಷ್ಮಾಣುಜೀವಿಯನ್ನು ಮನುಷ್ಯನ ದೇಹದೊಳಕ್ಕೆ ಸೇರಿಸುತ್ತದೆ.
ಪ್ಲಾಸ್ಮೋಡಿಯಮ್ ವಿಧಗಳು
- ಪ್ಲಾಸ್ಮೋಡಿಯಮ್ ಫಾಲ್ಸಿಪಾರಮ್
- ಪ್ಲಾಸ್ಮೋಡಿಯಮ್ ವೈವ್ಯಾಕ್ಸ್
- ಪ್ಲಾಸ್ಮೋಡಿಯಮ್ ಮಲೇರಿಯೇ
- ಪ್ಲಾಸ್ಮೋಡಿಯಮ್ ಓವಲೆ
- ಪ್ಲಾಸ್ಮೋಡಿಯಮ್ ನೊಲೆಸಿ
ರೋಗೋತ್ಪತ್ತಿ
ಮಲೇರಿಯಾ ರೋಗಪೀಡಿತ ವ್ಯಕ್ತಿಗೆ ಕಚ್ಚಿದ ಅನಾಫಿಲಿಸ್ ಸೊಳ್ಳೆ ರಕ್ತವನ್ನು ಹೀರಿಕೊಳ್ಳುವಾಗ ರೋಗಿಯ ರಕ್ತದಲ್ಲಿರುವ ಪ್ಲಾಸ್ಮೋಡಿಯಮ್ ಸೂಕ್ಷ್ಮಾಣುಜೀವಿಯ ಒಂದು ಲೈಂಗಿಕ ಪ್ರಕಾರದ ಜೀವಿಯೂ ಸೊಳ್ಳೆಯನ್ನು ಸೇರಿಕೊಳ್ಳುತ್ತದೆ. ನಂತರ ಅದು ಸೊಳ್ಳೆಯ ದೇಹದಲ್ಲೇ ವಿವಿಧ ಪ್ರಕಾರಗಳಾಗಿ ಮಾರ್ಪಾಡುಗೊಂಡು, ನಂತರ ಇನ್ನೊಬ್ಬ ಆರೋಗ್ಯವಂತ ವ್ಯಕ್ತಿಗೆ ಕಚ್ಚಿದಾಗ ಅದು ಮತ್ತೆ ಆ ವ್ಯಕ್ತಿಯ ರಕ್ತವನ್ನು ಸೇರಿಕೊಂಡು, ನಂತರ ಯಕೃತ್ತು, ಮತ್ತೆ ಪುನಃ ರಕ್ತವನ್ನು ಪ್ರವೇಶಿಸಿ ಕಣಗಳನ್ನು ಹಾನಿಗೊಳಿಸುತ್ತವೆ.
ಗುಣಲಕ್ಷಣಗಳು
- ಚಳಿ-ಜ್ವರ
- ಬೆವರುವಿಕೆ
- ಒಣ ಕೆಮ್ಮು
- ಹೊಟ್ಟೆಯಲ್ಲಿ ಸಂಕಟ, ವಾಂತಿ
- ತಲೆನೋವು
- ಕೈ ಕಾಲುಗಳಲ್ಲಿ ಸೆಳೆತ, ನೋವು
- ಬೆನ್ನು ನೋವು
ರೋಗ ಪರಿಣಾಮಗಳು
- ಸೆರೆಬ್ರಲ್ ಮಲೇರಿಯಾ ಮತ್ತು ಕೋಮಾ
- ಆಮ್ಲದ ಶೇಖರಣೆ
- ಕಿಡ್ನಿಗಳ ವಿಫಲ
- ಶ್ವಾಸಕೋಶಗಳಲ್ಲಿ ನೀರು ತುಂಬಿಕೊಳ್ಳುವುದು
- ರಕ್ತದಲ್ಲಿ ಗ್ಲೂಕೋಸ್ ಪ್ರಮಾಣ ಕಡಿಮೆಯಾಗುವುದು
- ರಕ್ತದೊತ್ತಡ ಕಡಿಮೆಯಾಗಿ ಪ್ರಜ್ಞಾಹೀನ ಸ್ಥಿತಿ ತಲುಪುವುದು
- ರಕ್ತ ಸೋರುವಿಕೆ ಮತ್ತು ರಕ್ತನಾಳಗಳೊಳಗೆ ವಿಪರೀತ ರಕ್ತ ಹೆಪ್ಪುಗಟ್ಟುವಿಕೆ
- ಸ್ನಾಯು ಸೆಳೆತಗಳು
ರೋಗನಿರ್ಣಯ ಮತ್ತು ಚಿಕಿತ್ಸೆ
ರಕ್ತಪರೀಕ್ಷೆ: ರಕ್ತದಲ್ಲಿ ಪ್ಲಾಸ್ಮೋಡಿಯಮ್ ಪರಾವಲಂಬಿ ಜೀವಿ ಇರುವುದನ್ನು ವಿವಿಧ ತಂತ್ರಜ್ಞಾನದ ಪರೀಕ್ಷೆಗಳ ಮೂಲಕ ಮಲೇರಿಯಾ ರೋಗನಿರ್ಣಯ ಮಾಡಲಾಗುವುದು
ರೋಗ ನಿರ್ಣಯವಾದ ನಂತರ ಅದಕ್ಕೆ ಕ್ಲೋರೊಕ್ವಿನ್, ಪ್ರೈಮಕ್ವಿನ್, ಅರ್ಟೆಮಿಸಿನಿನ್, ಮುಂತಾದ ಧಾತುಗಳನ್ನೊಳಗೊಂಡ ಸೂಕ್ತ ಚಿಕಿತ್ಸಾ ಪ್ರಕಾರವನ್ನು ಆಯ್ಕೆ ಮಾಡಿ ಸಲಹೆ ನೀಡಲಾಗುತ್ತದೆ.
ರೋಗ ತಡೆಯುವಿಕೆ
ಈ ರೋಗವನ್ನು ತಡೆಯಲು ಯಾವುದೇ ಲಸಿಕೆಗಳಿಲ್ಲ. ಆದರೆ ರೋಗ ಹರಡುವುದನ್ನು ತಡೆಗಟ್ಟಲು ಹಲವು ಮಾರ್ಗಗಳಿವೆ. ಸೊಳ್ಳೆಗಳನ್ನು ನಿರ್ಮೂಲನೆ ಮಾಡುವುದು
ಸೊಳ್ಳೆಗಳು ಕಡಿಯದಂತೆ ಅಥವಾ ಸೊಳ್ಳೆಗಳಿಂದ ಕಚ್ಚಿಸಿಕೊಳ್ಳದಂತೆ ಸ್ಪ್ರೇ, ಚರ್ಮ ಪೂರ್ತಿ ಮುಚ್ಚಿಕೊಳ್ಳುವಂತೆ ಬಟ್ಟೆಗಳನ್ನು ಧರಿಸುವಂತೆ ಎಚ್ಚರ ವಹಿಸುವುದು
ಮನೆಯೊಳಗೆ ಅಥವಾ ಮನೆಯ ಸುತ್ತ ನೀರು ನಿಲ್ಲುವ ಸ್ಥಳಗಳಿದ್ದಲ್ಲಿ ಅವುಗಳನ್ನು ತೆರವುಗಳಿಸುವುದು. ಕೀಟನಾಶಕ ಡಿಡಿಟಿ ಬಳಕೆ ಮಾಡುವುದು. ಮರಿಸೊಳ್ಳೆಗಳು ಅಥವಾ ಲಾರ್ವಾಗಳು ಉತ್ಪತ್ತಿಯಾಗುವ ಸ್ಥಳಗಳನ್ನು ಸ್ವಚ್ಛಗೊಳಿಸುವುದು. ಮನೆಯಲ್ಲಿ ರಾತ್ರಿ ಮಲಗುವಾಗ ಸೊಳ್ಳೆಪರದೆಗಳನ್ನು ಬಳಸುವುದು. ಕುಡಿಯುವ ನೀರು ಮತ್ತು ಬಳಸುವ ನೀರಿನ ಕಂಟೇನರ್ಗಳನ್ನು ಕನಿಷ್ಠ ವಾರಕ್ಕೊಮ್ಮೆಯಾದರೂ ಸ್ವಚ್ಛಗೊಳಿಸಬೇಕು
ಶಾಲಾ ಕಾಲೇಜುಗಳಲ್ಲಿ ಮಲೇರಿಯಾ ಸೇರಿದಂತೆ ಇತರ ಸಾಂಕ್ರಾಮಿಕ ರೋಗಗಳ ಬಗ್ಗೆ ಅರಿವು ಮೂಡಿಸಬೇಕು. ಈ ಮೊದಲು ತಿಳಿಸಿರುವ ಮಲೇರಿಯಾದ ಯಾವುದೇ ಗುಣಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ವೈದ್ಯರ ಸಮಾಲೋಚನೆ ಪಡೆಯಬೇಕು.

ಅಂತರಂಗ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು
ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ
ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.
ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.
ಖರ್ಗೋನ್ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.
ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.
ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಅಂಕಣ
Indian birthwort: ಪರಮಾತ್ಮನ ಹೆಸರಲ್ಲೇ ಇರುವ ದಿವ್ಯೌಷದ ಈಶ್ವರ ಬಳ್ಳಿ ಬಗ್ಗೆ ಗೊತ್ತೇ?
‘ಈಶ್ವರ’ ಎಂದ ಕೂಡಲೇ ಪರಮಾತ್ಮನನ್ನೆ ನೆನಪಿಸಿಕೊಳ್ಳೋ ನಮಗೆ ಅದೇ ಹೆಸರಿನಲ್ಲಿ ದಿವ್ಯೌಷಧಿ ಇದೆ ಎಂಬುದು ಎಷ್ಟು ಜನರಿಗೆ ತಿಳಿದೀತು? ಹೌದು! ಪರಮಾತ್ಮನ ಹೆಸರಿನಲ್ಲೇ ಒಂದು ಗಿಡಮೂಲಿಕೆ ಇದೆ (Indian birthwort). ಇದರ ವಿಶೇಷತೆ ಏನು? ಅದರಿಂದಾಗುವ ಪ್ರಯೋಜನಗಳೇನು? ಆರೋಗ್ಯದ ಮೇಲೆ ಬೀರುವ ಪ್ರಬಾವಗಳೇನು? ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ.
ಈ ಬಳ್ಳಿಯನ್ನು ಹೆಚ್ಚಾಗಿ ಭಾರತ, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಗಳಲ್ಲಿ ಕಾಣಬಹುದಾಗಿದೆ. ಇದರ ವೈಜ್ಞಾನಿಕ ಹೆಸರು ಅರಿಸ್ಟೋಲೋಚಿಯ ಇಂಡಿಕಾ. ಸಾಮಾನ್ಯವಾಗಿ ಮೂಲಿಕೆ ಮರಕ್ಕೆ ಸುತ್ತಿಕೊಂಡು ಬೆಳೆಯುವ ಕಪ್ಪು ಬಳ್ಳಿಯಾಗಿದ್ದು, ಇದರ ಎಲೆಗಳು ಉದ್ದವಾಗಿ, ತಳದಲ್ಲಿ ಅಗಲವಾಗಿ, ತುದಿಯಲ್ಲಿ ಮೊನಚಾಗಿ, ಮೃದುವಾಗಿರುತ್ತದೆ. ಇನ್ನೂ ಇದರ ಬೀಜಗಳು ಚಪ್ಪಟೆಯಾಗಿ, ಅಂಡಕಾರವಾಗಿದ್ದು ಪುಕ್ಕಗಳನ್ನು ಹೊಂದಿದೆ ಹಾಗು ಇದರ ಬೇರುಗಳಲ್ಲಿ ಸುಗಂಧ ತೈಲವಿರುತ್ತದೆ.
ಈಶ್ವರ ಬಳ್ಳಿ (Indian birthwort)ಯ ಪೌರಾಣಿಕ ಹಿನ್ನೆಲೆ:
ನಮ್ಮೆಲ್ಲರಿಗೂ ತಿಳಿದಂತೆ ಶಿವ ಸಮುದ್ರ ಮಂಥನ ಮಾಡುವಾಗ ಹಾಲಾಹಲ (ವಿಷ) ಉತ್ಪತ್ತಿಯಾಯಿತು. ಆ ವಿಷ ಯಾರಿಗೂ ತೊಂದರೆಯಾಗಬಾರದೆಂದು ತಾನೇ ಅದನ್ನು ಕುಡಿದ. ಇದನ್ನು ನೋಡಿದ ಪಾರ್ವತಿ ದೇವಿ ಆ ವಿಷ ತನ್ನ ಪತಿಯ ಹೊಟ್ಟೆ ಸೇರಬಾರದೆಂದು ಆತನ ಕುತ್ತಿಗೆಯನ್ನು ಒತ್ತಿ ಹಿಡಿದಳು. ವಿಷ ಒಳ ಹೋಗಲಿಲ್ಲ. ವಿಷದ ಪ್ರಭಾವದಿಂದ ಕುತ್ತಿಗೆ ನೀಲ ವರ್ಣವಾಯಿತು. ಶಿವ ನೀಲಕಂಠನಾದ. ಶಿವ ವಿಷ ಕುಡಿದರೂ ಶಿವನಿಗೆ ಏನೂ ಆಗಲಿಲ್ಲ. ವಿಷವನ್ನು ನಿರ್ವಿಷ ಮಾಡುವ ಗುಣ ಶಿವನಿಗಿದ್ದಂತೆ ಈ ಗಿಡಕ್ಕೂ ಇರುವ ಕಾರಣ ‘ಈಶ್ವರ’ ಎಂಬ ಹೆಸರು ಈ ವನಸ್ಪತಿಗೆ ಇಟ್ಟಿದ್ದಾರೆ.
ಇದನ್ನೂ ಓದಿ: ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ
‘ಈಶ್ವರ’ ಬಳ್ಳಿ ಮತ್ತು ಅದರ ಫಲ ನೋಡಲು ಹೇಗಿರುತ್ತದೆ?
ಕೆಲ ‘ಈಶ್ವರ’ ಬಳ್ಳಿಯು ಮರದಂತೆ ಉದ್ದಕ್ಕೆ ಏರುತ್ತದೆ. ಮತ್ತಷ್ಟು ಬಳ್ಳಿಯು ಪೊದೆಯಾಗಿ ಆವರಿಸಿಕೊಳ್ಳುತ್ತದೆ. ಸ್ವಲ್ಪ ಉದ್ದ ಆಯತಾಕಾರದ ಎಲೆಗಳು. ಎಲೆಗಳು ಅಲ್ಲಾಡಿದರೆ ಪರಿಮಳ ಸೂಸುತ್ತದೆ. ಎಲೆಯನ್ನು ಕಿವಿಚಿದರೂ ಪರಿಮಳ ಬರುತ್ತದೆ. ಹೂಗಳು ಬಾಯಿ ತೆರೆದ ಹಕ್ಕಿಗಳಂತೆ ಕಂಡುಬರುತ್ತದೆ. ಫಲಗಳು ಉದ್ದ ಹಾಗೂ ಸ್ವಲ್ಪ ದುಂಡಾಗಿ ಇರುತ್ತದೆ. ಫಲ ಬೆಳೆದು ಒಡೆದಾಗ ತಲೆ ಕೆಳಗಾಗಿ ಬಿಡಿಸಿದ ಪ್ಯಾರಾಚೂಟ್ನಂತೆ ಕಾಣುತ್ತದೆ. ಅದರೊಳಗೆ ತೆಳುವಾದ ತ್ರಿಕೋಣಾಕಾರದ ಬೀಜಗಳು ಇರುತ್ತದೆ.
‘ಈಶ್ವರ’ ಬಳ್ಳಿ (Indian birthwort)ಯಿಂದ ಆಗುವ ಪ್ರಯೋಜನಗಳೇನು?
ಭಾರತದ ಎಲ್ಲಾ ಕಡೆ ಕಂಡು ಬರುವ ಈಶ್ವರ ಬಳ್ಳಿಯ ಬೇರು, ಎಲೆಗಳು ಔಷಧಿಗಾಗಿ ಉಪಯೋಗಿಸಲ್ಪಡುತ್ತದೆ. ಕ್ರಿಮಿ ಬಾಧೆ, ಕಫ ಬಾಧೆ, ಸ್ತ್ರೀಯರ ಕೆಲವು ತೊಂದರೆಗಳಲ್ಲಿ, ವಿಷ ಚಿಕಿತ್ಸೆಯಲ್ಲಿ ವಿಶೇಷವಾಗಿ ಇದನ್ನು ಉಪಯೋಗಿಸಲ್ಪಡುತ್ತದೆ.
ಜೇಡ, ಚೇಳು, ಇಲಿ ಕಚ್ಚಿದರೆ: ಇದರ 3ಗ್ರಾಂ ಬೇರನ್ನು ಅಕ್ಕಿ ತೊಳೆದ ನೀರಲ್ಲಿ ಕಲಸಿ ಕುಡಿಸಬೇಕು ಹಾಗೂ ಅದರ ಎಲೆಯನ್ನು ನೀರಲ್ಲಿ ಅರೆದು ಕಚ್ಚಿದಲ್ಲಿಗೆ ಲೇಪಿಸಬೇಕು.
ತಲೆ ನೋವಿಗೆ ರಾಮಬಾಣ: ಈಶ್ವರ ಬಳ್ಳಿಯ ಎಲೆಯಲ್ಲಿ 10 ಗ್ರಾಂ ರಸ ತೆಗೆದು, 3ಗ್ರಾಂ ಅರಿಶಿನ ಪುಡಿ ಸೇರಿಸಿ ಕುಡಿಯುವುದರಿಂದ ತಲೆನೋವು ಶೀಘ್ರವಾಗಿ ಕಡಿಮೆಯಾಗುತ್ತದೆ.
ಗಂಟುನೋವು, ಬಿಳಿ ಮಚ್ಚೆಗಳು: ಈ ಎಲೆಯನ್ನು ನೀರಲ್ಲಿ ಅರೆದು ಗಂಟುನೋವು ಅಥವಾ ಬಿಳಿ ಮಚ್ಚೆಗಳ ಮೇಲೆ ಹಚ್ಚುತ್ತ ಬಂದರೆ ಕ್ರಮೇಣ ವಾಸಿಯಾಗುತ್ತದೆ.
ಕೆಮ್ಮು ಕಫಕ್ಕೆ ಔಷಧಿ: ಇದರ ಎಲೆಯ ಜ್ಯೂಸ್ ತೆಗೆದು 15 ಎಂಎಲ್ ನಷ್ಟು ಕುಡಿಸುವುದರಿಂದ ಕಡಿಮೆಯಾಗುವುದು. ಕೆಲವೊಮ್ಮೆ ಈ ಎಲೆಯ ಜ್ಯೂಸ್ ಕುಡಿದ ಸ್ವಲ್ಪ ಹೊತ್ತಿನಲ್ಲಿ ಕಫ ವಾಂತಿಯಾಗಿ ಕರಗಿ ಹೋಗುತ್ತದೆ. ಕಫ ಜಾಸ್ತಿ ಇರುವಾಗ ಸಾಮಾನ್ಯವಾಗಿ ಅಮೃತಾಂಜನ, ವಿಕ್ಸ್ ಎದೆಗೆ ಹಚ್ಚುತ್ತಾರೆ. ಅದೇ ರೀತಿ ಎಲೆಯನ್ನು ಅರೆದು ಎದೆಗೆ ಹಚ್ಚಬಹುದು.
ಮುಟ್ಟಿನ ದೋಷ ನಿವಾರಣೆ: ಹೆಣ್ಣುಮಕ್ಕಳ ಋತುಚಕ್ರದ ವೇಳೆ ಕಾಣಿಸಿಕೊಳ್ಳುವ ಹೊಟ್ಟೆನೋವಿಗೆ 10ಗ್ರಾಂ ಈಶ್ವರ ಬೇರಿನ ಕಷಾಯ ಮಾಡಿ (30 ರಿಂದ 40 ಎಂ.ಎಲ್) ಕುಡಿಸಬೇಕು.
ಹೊಟ್ಟೆ ಕ್ರಿಮಿ ಬಾಧೆ: 5-10 ಮಿಲಿ ಎಲೆರಸವನ್ನು 3 ದಿನ ಕುಡಿಯುವುದರಿಂದ ಕಡಿಮೆಯಾಗುವುದು.
ಜ್ವರಕ್ಕೆ ದಿವ್ಯೌಷಧಿ: 5 ಗ್ರಾಂ ಈಶ್ವರ ಬೇರನ್ನು ಕಷಾಯ ಮಾಡಿ ಅದಕ್ಕೆ 1/2 ಚಮಚ ಕಾಳು ಮೆಣಸು ಪುಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು. ಶರೀರ ಬಿಸಿ ಆಗಿ ಚಳಿಯಿಂದ ಕೂಡಿದ ಜ್ವರವಿದ್ದರೆ ಈಶ್ವರ ಬೇರಿನ ಕಷಾಯದೊಂದಿಗೆ ಈಶ್ವರ ಬೇರಿನ ಎಲೆ ರಸಕ್ಕೆ ಹಿಪ್ಪಿಯನ್ನು ಪುಡಿಮಾಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು.
ಸರ್ಪ ಸುತ್ತಿಗೆ ರಾಮಬಾಣ: ಇತ್ತೀಚೆಗೆ ಸರ್ಪ ಸುತ್ತಿಗೆ ಅನೇಕ ಔಷಧಿಗಳಿದ್ದರು ಈಶ್ವರ ಬೇರು ಮತ್ತು ನೀಲಿ ಸೊಪ್ಪನ್ನು ಸೇರಿಸಿ ಅರೆದು ಹಚ್ಚುವುದರಿಂದ ಉರಿ ನೋವು ಕಡಿಮೆಯಾಗುವುದು.
ದೃಷ್ಟಿ ದೋಷ ನಿವಾರಣೆ: ಇದರ ಬೇರನ್ನು ನಯವಾಗಿ ಚೂರ್ಣಮಾಡಿ ಅದಕ್ಕೆ ಅಪ್ಪಟ ಗೋರೋಜನ ಮತ್ತು ಚಂದನ ಸೇರಿಸಿ ತಿಲಕವಿಟ್ಟರೆ ದೃಷ್ಟಿ ದೋಷ ಪರಿಹಾರವಾಗುತ್ತದೆ.
ಮಲಬದ್ಧತೆ ಮತ್ತು ಮೂಲವ್ಯಾಧಿ ನಿವಾರಣೆ: ಈಶ್ವರಿಬೇರು, ಹಾವು ಮೆಕ್ಕೆ ಬೇರು ದಂತಿ, ತಿಗಡೆ ಕೊಮ್ಮೆ ಬೇರು, ಅಳಲೆಕಾಯಿ ಸಿಪ್ಪೆ, ಹಿಪ್ಪಲಿ ಇವುಗಳೆಲ್ಲವನ್ನು ಸಮತೂಕದಲ್ಲಿ ನಯವಾಗಿ ಚೂರ್ಣಿಸಬೇಕು. ನಂತರ 2 ರಿಂದ 2.5 ಗ್ರಾಂ ಚೂರ್ಣವನ್ನು ಸೇವಿಸಿ ಬಿಸಿನೀರು ಕುಡಿದರೆ ಮಲಬದ್ಧತೆ ಮತ್ತು ಮೂಲವ್ಯಾದಿ ನಿವಾರಣೆಯಾಗುತ್ತದೆ.
ಹೀಗೆ ಈಶ್ವರ ಬೇರು (Indian birthwort) ಮತ್ತು ಅದರ ಎಲೆಯಲ್ಲಿ ಅಡಗಿರುವ ದಿವ್ಯೌಷಧಿ ಅಪಾರ. ಅದರಲ್ಲಿ ತೀಕ್ಷ ಗುಣಗಳುಳ್ಳ ಮದ್ದಾಗಿದ್ದು, ಅನೇಕ ಕಾಯಿಲೆಗಳಿಗೆ ರಾಮಬಾಣವಾಗಿದೆ. ಯಾವುದೇ ಔಷಧಿಯಾದರು ಉಪಯೋಗಿಸು ಮುನ್ನ ಒಮ್ಮೆ ತಜ್ಞ ವೈದ್ಯರ ಸಲಹೆ ಪಡೆಯುವುದು ಸೂಕ್ತ.

ದಿನದ ಸುದ್ದಿ
ಗೃಹಬಳಕೆ ಎಲ್ಪಿಜಿ ಸಿಲೆಂಡರ್ ಬೆಲೆಯಲ್ಲಿ ಬದಲಾವಣೆ ಇಲ್ಲ
ಸುದ್ದಿದಿನಡೆಸ್ಕ್:ಗೃಹಬಳಕೆಯ ಎಲ್ಪಿಜಿ ಸಿಲೆಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಸ್ಪಷ್ಟಪಡಿಸಿದೆ.
ಗೃಹ ಬಳಕೆ ಎಲ್ಪಿಜಿ ಸಿಲೆಂಡರ್ ಬೆಲೆಯನ್ನು 111 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ ಎಂಬ ಮಾಧ್ಯಮ ವರದಿಗಳನ್ನು ತಳ್ಳಿ ಹಾಕಿರುವ ಸಚಿವಾಲಯ, ವಾಣಿಜ್ಯ ಸಿಲೆಂಡರ್ ಬೆಲೆಯು ಅಂತಾರಾಷ್ಟ್ರೀಯ ಕಚ್ಚಾ ಅನಿಲ ಮತ್ತು ಸಂಬAಧಿತ ದರಗಳ ಮೇಲೆ ಅವಲಂಬಿತವಾಗಿದ್ದು, ಆಗಾಗ್ಗೆ ಮಾರುಕಟ್ಟೆಯ ದರಗಳು ಬದಲಾಗುತ್ತವೆ. ಆದರೆ, ಗೃಹ ಬಳಕೆಯ ಸಿಲೆಂಡರ್ ದರದಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ತಿಳಿಸಿದೆ.
ದೆಹಲಿಯಲ್ಲಿ 14.2 ಕೆಜಿ ಗೃಹ ಬಳಕೆ ಅಡುಗೆ ಅನಿಲ ಸಿಲೆಂಡರ್ ಬೆಲೆ 950 ರೂಪಾಯಿಯಾಗಿದ್ದು, ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಇದು 553 ರೂಪಾಯಿ ಬೆಲೆಯಲ್ಲಿ ಲಭ್ಯವಿದೆ. ಇದು ಆಗಸ್ಟ್ 2023 ರಿಂದ ನವೆಂಬರ್ 2025ರವರೆಗೆ ಹೋಲಿಸಿದರೆ, ಶೇಕಡಾ 39 ರಷ್ಟು ದರ ಕಡಿತವನ್ನು ಸೂಚಿಸುತ್ತದೆ. ಜನರಿಗೆ ಸುಸ್ಥಿರ ಇಂಧನ ಪೂರೈಕೆಗೆ ಒತ್ತು ನೀಡಲಾಗಿದ್ದು, ದರ ಬದಲಾವಣೆ ಇಲ್ಲ ಎಂದು ಸಚಿವಾಲಯ ಮಾಹಿತಿ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243




