Connect with us

ದಿನದ ಸುದ್ದಿ

ಮಂಡ್ಯದ ‘ಐದು ರೂಪಾಯಿ ಡಾಕ್ಟ್ರು’ ಬಗ್ಗೆ ಸಂಸದೆ ಸುಮಲತಾ ಹೇಳಿದ್ದೇನು ಗೊತ್ತಾ..?

Published

on

  • ಸುಮಲತಾ ಅಂಬರೀಶ್, ಲೋಕ ಸಭಾ ಸದಸ್ಯೆ, ಮಂಡ್ಯ

ನನ್ನ ಮಂಡ್ಯ ನನ್ನ ಹೆಮ್ಮೆ

ಲ್ಲರಿಗೂ ಮಣ್ಣಿನ ಗುಣ ಇರುತ್ತಂತೆ. ಅಂತ ಮಂಡ್ಯದ ಮಣ್ಣಿನ ಗುಣ ಇರೋ ಒಬ್ಬ ವ್ಯಕ್ತಿ ಇವರು. ಇವರ ಬಗ್ಗೆ ನೀವು ಕೇಳಿರಬಹುದು.

ಥಟ್ಟಂತೆ ನೋಡಿದರೆ ಅವರು ಸಾಮಾನ್ಯರಲ್ಲಿ ಸಾಮಾನ್ಯ. ಆದರೆ, ಅವರ ಮುಂದೆ ಸಾಲುಗಟ್ಟಿ ನಿಲ್ಲುವ ಜನ, ಇವರು ತಪಾಸಣೆ ಮಾಡಿ ಬರೆದು ಕೊಡುವ ಔಷದಿ ಚೀಟಿ, ಇವೆಲ್ಲ ಕಣ್ಣಿಗೆ ಕಟ್ಟಿದಂತೆ ಬರುತ್ತೆ, ಇವರ ಹೆಸರು ಕೇಳಿದರೆ. ಅವರೇ ನಮ್ಮ ಡಾ. ಶಂಕರೇಗೌಡರು. ಇಂಗ್ಲಿಷ್ ಪತ್ರಿಕೆಗಳಲ್ಲಿ, ನ್ಯಾಷನಲ್ ಮೀಡಿಯಾದಲ್ಲಿ ಕೂಡ ಇವರ ಬಗ್ಗೆ ವರದಿಗಳು ಬಂದಿವೆ. ಅವೆಲಕ್ಕೂ ಮೀರಿದ ಸಹಜ ಪ್ರಾಮಾಣಿಕ ಸಂಬಂಧ ಇವರಿಗೆ ನಮ್ಮ ಮಂಡ್ಯ ಜನರ ಜೊತೆ ಇದೆ.

ನಮ್ಮ ಮಂಡ್ಯ ಕ್ಷೇತ್ರದ ರಿಯಲ್ ಹೀರೋಗಳಲ್ಲಿ ಒಬ್ಬರು ಇವರು. ವೈದ್ಯಕೀಯ ಕ್ಷೇತ್ರದಲ್ಲಿ ದುಡ್ಡೇ ಮಾಡಬೇಕು ಅಂತಿದ್ದರೆ, ಬಂಗಲೆಯಲ್ಲಿ ವಾಸ, ದುಬಾರಿ ಕಾರು, ದೊಡ್ಡದೊಂದು ಆಸ್ಪತ್ರೆ ಕಟ್ಟಬಹುದಿತ್ತು. ಆದರೆ, ವೈದ್ಯ ವೃತ್ತಿಯನ್ನು ಅವರು ಬಳಕೆ ಮಾಡಿಕೊಂಡಿದ್ದು ಕೇವಲ ಕಾಯಿಲೆಯನ್ನು ಗುಣಪಡಿಸುವುದಕ್ಕಾಗಿ. ಅದರಲ್ಲೂ ಬಡವರ, ನಿರ್ಗತಿಕರ ಸೇವೆಗಾಗಿ.

ಈಗಲೂ ಅವರು ಎರಡು ಕೋಣೆಯ ಚಿಕ್ಕ ಮನೆಯಲ್ಲಿ ವಾಸ. ಸಣ್ಣದೊಂದು ಆಸ್ಪತ್ರೆ ಕಟ್ಟಲು ಕೋಟ್ಯಾಂತರ ರೂಪಾಯಿ ಬೇಕು. ಚಿಕ್ಕದೊಂದು ಕೋಣೆ ನಿರ್ಮಿಸಲೂ ಲಕ್ಷಾಂತರ ರೂಪಾಯಿ ಬೇಕು. ಅದನ್ನು ತರಲು ರೋಗಿಯನ್ನೇ ಅವಲಂಬಿಸಬೇಕು. ಈ ಹೊರೆಯನ್ನು ರೋಗಿಗಳ ಮೇಲೆ ಹಾಕದೇ, ಒಂದು ಅಂಗಡಿ ಮುಂದಿನ ಕಟ್ಟೆಯಲ್ಲೇ ಕೂತು ರೋಗಿಯನ್ನು ನೋಡುತ್ತಾರೆ. ಅಗ್ಗದ ಔಷಧಿ ಚೀಟಿಗಳನ್ನು ಬರೆದು ಕೊಡುತ್ತಾರೆ.

ಬೆಳಗ್ಗೆ 8 ಗಂಟೆಯಿಂದ ಶುರುವಾಗುವ ಈ ಕಾಯಕ ಮಧ್ಯಾಹ್ನದವರೆಗೆ ಮತ್ತು ಸಾಯಂಕಾಲ ಕೂಡ ನಿರಂತರವಾಗಿ ಇರುತ್ತದೆ. ನಿತ್ಯವೂ ನೂರಾರು ರೋಗಿಗಳಿಗೆ ಇವರು ಚಿಕಿತ್ಸೆ ನೀಡುತ್ತಾರೆ. ಹೆಚ್ಚಾಗಿ ಚರ್ಮರೋಗಕ್ಕೆ ಸಂಬಂಧಿಸಿದಂತೆ ಔಷಧಿ ನೀಡುತ್ತಾರೆ. ಕೇವಲ ಮಂಡ್ಯದ ಜನರು ಮಾತ್ರವಲ್ಲ, ರಾಜ್ಯದ ನಾನಾ ಭಾಗಗಳಿಂದಲೂ ಜನರು ಬರುತ್ತಾರೆ. ಹಲವು ರಾಜ್ಯಗಳಿಂದಲೂ ಬಂದಿದ್ದು ಉಂಟು. ಆಚೆ ದುಬಾರಿ ಅನಿಸುವ ಈ ಚಿಕಿತ್ಸೆಗೆ ಶಂಕರೇಗೌಡರು ಪಡೆಯುವ ಹಣವೆಷ್ಟು ಗೊತ್ತಾ? ಕೇವಲ ಐದು ರೂಪಾಯಿ ಮಾತ್ರ! ಹಾಗಾಗಿ ಇವರನ್ನು ಪ್ರೀತಿಯಿಂದ ಜನರು “ಐದು ರೂಪಾಯಿ ಡಾಕ್ಟ್ರು” ಅಂತ ಕರೀತಾರೆ.

ಎಂಡಿ ಮಾಡಿರುವ ವೈದ್ಯರೊಬ್ಬರು ಕೇವಲ ಐದು ರೂಪಾಯಿಗೆ ಚಿಕಿತ್ಸೆ ಕೊಡುತ್ತಾರೆ ಎಂದರೆ ಅಚ್ಚರಿ ಆಗೋದು ನಿಜ. ಇಂಥದ್ದೊಂದು ಅಚ್ಚರಿಯ ಕೆಲಸವನ್ನು ನಿತ್ಯ ಮಾಡುವ ಶಂಕರೇಗೌಡರಿಗೆ ನನ್ನದೊಂದು ನಮಸ್ಕಾರ. ಇಂತಹ ಮಹನೀಯರ ಸಂಖ್ಯೆ ಇನ್ನೂ ಹೆಚ್ಚಾಗಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!

Published

on

ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.

ನಡೆದಿದ್ದೇನು?

ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.

ಡೆತ್ ನೋಟ್‌ನಲ್ಲಿತ್ತು ಕೊನೆಯ ಆಸೆ

ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.

ತಮಿಳುನಾಡಿನಲ್ಲಿ ಅಂತ್ಯಕ್ರಿಯೆ

ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.

ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್‌; ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: 2026-27ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿನ ಮೂರು ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಹಾಗೂ ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ 2026 ರ ಜುಲೈ 01ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 23 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 25 ವರ್ಷ ಮೀರಿರಬಾರದು. ಒಟ್ಟು 39 ಅಭ್ಯರ್ಥಿಗಳನ್ನು (ಪುರುಷ ಮತ್ತು ಮಹಿಳಾ) ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500/- ಗಳ ಶಿಷ್ಯವೇತನ ನೀಡಲಾಗುವುದು., ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಡಿಪ್ಲೋಮಾ ಕೋರ್ಸ್‌ಗೆ ನೇರ ಪ್ರವೇಶಕ್ಕೆ https://khtigadag.ac.in/AdmissionForm.pdf ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) https://khtigadag.ac.in/Lateralentryadmissionform.pdf ಈ ಲಿಂಕ್‌ಗಳ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಮೇ 30 ರೊಳಗೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ-ಬೆಟಗೇರಿ-582102 ಇವರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಳಿಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಕಾಲೇಜು ರಸ್ತೆ, ನಿಟ್ಟುವಳ್ಳಿ, ದಾವಣಗೆರೆ ಅಥವಾ ದೂರವಾಣಿ ಸಂಖ್ಯೆ: 08192-262362 ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ

Published

on

ಸುದ್ದಿದಿನ,ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ದಾವಣಗೆರೆಯ ಭೂಮಿಕಾ ನಗರದ ನಿವಾಸಿಯಾಗಿರುವ 52 ವರ್ಷದ ಸರ್ಕಾರಿ ಕಾಲೇಜಿನ ಉಪನ್ಯಾಸಕ ಹಣ ಕಳೆದುಕೊಂಡಿದ್ದಾರೆ.

ಉಪನ್ಯಾಸಕರು ಮೊದಲಿಗೆ ಟೆಲಿಗ್ರಾಂ ಮೂಲಕ ಲಿಂಕ್ ಕ್ಲಿಕ್ ಮಾಡಿದ್ದಾರೆ. ಅಲ್ಲಿ ವಂಚಕರು ಹೇಳಿದಂತೆ ಹಲವು ಲಿಂಕ್​ಗಳನ್ನು ಕ್ಲಿಕ್ ಮಾಡುತ್ತಾ ಹೋಗಿದ್ದು, ಹಂತಹಂತವಾಗಿ ಹಣ ಕಳೆದುಕೊಂಡಿದ್ದಾರೆ.

ಲಾಭದ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಲಾಭ ಹೋಗಲಿ, ಅಸಲೂ ಬಾರದ ಕಾರಣ ಅನುಮಾನಗೊಂಡು ತಾನು ಹಣ ಕಳೆದುಕೊಂಡಿರುವುದು ದೃಢಪಟ್ಟಿದೆ.‌ ನಂತರ ಸೈಬರ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending