ರಾಜಕೀಯ

ಮಂಡ್ಯ ಲೋಕಸಭಾ ಚುನಾವಣೆ : ಅ.16 ನಾಮಪತ್ರ ಸಲ್ಲಿಸಲು ಕೊನೆಯ ದಿನ

Published

on

ಸುದ್ದಿದಿನ ಡೆಸ್ಕ್ : ಮಂಡ್ಯ ಲೋಕಸಭಾ ಕ್ಷೇತ್ರದ ತೆರುವುವಾದ ಸ್ಥಾನಕ್ಕೆ ಉಪ ಚುನಾವಣೆಯನ್ನು ಚುನಾವಣಾ ಆಯೋಗ ಘೋಷಿಸಿದ್ದು, ಎಲ್ಲಾ ರಾಜಕೀಯ ಪಕ್ಷಗಳು ಚುನಾವಣೆ ಶಾಂತಿಯುತ ನಡೆಸಲು ಚುನಾವನಾ ಮಾದರಿ ನೀತಿ ಸಂಹಿತೆಯನ್ನು ಕಟ್ಟು ನಿಟ್ಟಾಗಿ ಪಾಲಿಸುವ ಮೂಲಕ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎನ್.ಮಂಜುಶ್ರೀ ಅವರು ತಿಳಿಸಿದ್ದಾರೆ.

ಇಂದು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಮಂಡ್ಯ ಲೋಕಸಭೆಯ ಉಪ ಚುನಾವಣೆ ಸಂಬಂಧ ನಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಚುನಾವಣಾ ನೀತಿ ಸಂಹಿತೆ ಅಕ್ಟೋಬರ್ 6ರ ರಿಂದಲೇ ಜಾರಿಯಲ್ಲಿದ್ದು, ನವೆಂಬರ್ 8 ರ ವರೆಗೆ ಜಾರಿಯಲ್ಲಿರುತ್ತದೆ. ಈ ನಿಟ್ಟಿನಲ್ಲಿ ರಾಜಕೀಯ ಪಕ್ಷಗಳು ಮಾದರಿ ನೀತಿ ಸಂಹಿತೆ ಪಾಲಿಸುವ ಮೂಲಕ ಉಪ ಚುನಾವಣೆಯನ್ನು ಯಶಸ್ವಿಯಾಗಿ ನಡೆಸಲು ಸಹಕರಿಸಬೇಕು ಎಂದರು.

ಮಂಡ್ಯ ಜಿಲ್ಲೆಯ ಎಲ್ಲಾ ಎಳು ವಿಧಾನಸಭಾ ಕ್ಷೇತ್ರ ಹಾಗೂ ಕೆ.ಆರ್.ನಗರ ವಿಧಾನ ಸಭಾ ಕ್ಷೇತ್ರ ಸೇರಿದಂತೆ ಮಂಡ್ಯ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 16,81,678 ಮತದಾರರಿದ್ದು, ಅದರಲ್ಲಿ 8,42,017 ಪುರುಷ, 8,39,519 ಮಹಿಳಾ, 142 ಇತರೆ ಹಾಗೂ 717 ಸೇವಾ ಮತದಾರರಿದ್ದಾರೆ. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ಯಾವುದೇ ರೀತಿಯ ತಿದ್ದುಪಡಿಗಾಗಿ ಅರ್ಜಿಗಳನ್ನು ಅಕ್ಟೋಬರ್ 9ರ ವರೆಗೆ ಅರ್ಜಿಗಳನ್ನು ಸಲ್ಲಿಸಬಹುದು ಎಂದರು.

ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆಯ ಅಧಿಸೂಚನೆ ಅಕ್ಟೋಬರ್ 9 ರಂದು ಪ್ರಕಟಗೊಳ್ಳಲಿದ್ದು, ಅಕ್ಟೋಬರ್ 16 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಅಕ್ಟೋಬರ್ 17 ರಂದು ನಾಮಪತ್ರಗಳ ಪರಿಶೀಲನಾ ಕಾರ್ಯ ನಡೆಯಲಿದೆ. ಅಕ್ಟೋಬರ್ 20 ರಂದು ನಾಮಪತ್ರ ಹಿಂತೆದುಕೊಳ್ಳಲು ಕಡೆಯ ದಿನವಾಗಿದ್ದು, ನವೆಂಬರ್ 3 ರಂದು ಮತದಾನ ಹಾಗೂ ನವೆಂಬರ್ 6 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಮತಯಂತ್ರಗಳ ಜೊತೆಗೆ ಮತ ಖಾತ್ರಿ ಪಡಿಸುವ ವಿವಿಪ್ಯಾಟ್ ಯಂತ್ರವನ್ನು ಬಳಸಲಾಗುತ್ತಿದೆ ಎಂದು ತಿಳಿಸಿದರು.

ಚುನಾವಣೆಗೆ ಸಂಬಂಧಿಸಿದ ವಿವಿಧ ಕಾರ್ಯಗಳನ್ನು ಮೇಲುಸ್ತುವಾರಿ ಮಾಡಲು ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಮಾದರಿ ನೀತಿ ಸಂಹಿತೆಯನ್ನು ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಾರಿಗೊಳಿಸಲು ಸೆಕ್ಟ್‍ರ್ ಅಧಿಕಾರಿ, ಸಂಚಾರಿ ತಪಾಸಣೆ ದಳ, ಸ್ಥಿರ ಜಾಗೃತ ದಳ, ವಿಡಿಯೋ ವೀಕ್ಷಣಾ ತಂಡ, ತಾಲ್ಲೂಕು ಮಟ್ಟದ ಮಾದರಿ ನೀತಿ ಸಂಹಿತೆ ತಂಡಗಳು, ವಿಡಿಯೋ ವಿಚಕ್ಷಣಾ ದಳ ಹೀಗೆ ಹಲವಾರು ತಂಡಗಳನ್ನು ರಚಿಸಲು ಕ್ರಮವಹಿಸಲಾಗಿದೆ ಎಂದು ತಿಳಿಸಿದರು.

ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿಯನ್ನು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿದ್ದು, ರಾಜಕೀಯ ಪಕ್ಷ ಅಥವಾ ಅಭ್ಯರ್ಥಿ ಮಾಧ್ಯಮಗಳಲ್ಲಿ ಚುನಾವಣಾ ಪ್ರಚಾರ ಮಾಡುವ ಮುನ್ನ ಸಮಿತಿಯಿಂದ ಅನುಮತಿಯನ್ನು ಕಡ್ಡಾಯವಾಗಿ ಪಡೆಯಬೇಕು. ಸರ್ಕಾರಿ ರಜಾ ದಿನಗಳನ್ನು ಹೊರತು ಪಡಿಸಿ, ಅಭ್ಯರ್ಥಿಗಳು ಜಿಲ್ಲಾಧಿಕಾರಿಯವರು ಕಚೇರಿಯಲ್ಲಿ ಅಕ್ಟೋಬರ್ 9 ರಿಂದ 16ರ ವರೆಗೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯ ವರೆಗೆ ನಾಮಪತ್ರ ಸಲ್ಲಿಸಬಹುದು ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಪಿ.ವಿಜಯ್ ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರುಗಳು ಭಾಗವಹಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version