ದಿನದ ಸುದ್ದಿ
ರಾಜ್ಯ ಸರ್ಕಾರದ ನೂರು ದಿನಗಳ ಸಾಧನೆ ಕುರಿತಾದ ಛಾಯಾಚಿತ್ರಗಳ ಪ್ರದರ್ಶನ
ಸುದ್ದಿದಿನ,ಮಂಡ್ಯ : ಕರ್ನಾಟಕ ಸರ್ಕಾರ ಕಳೆದ ನೂರು ದಿನಗಳಲ್ಲಿ ಮಾಡಿರುವ ಸಾಧನೆ, ಸಾರ್ವಜನಿಕರಿಗೆ ಸ್ಪಂದಿಸಿದ ರೀತಿ-ನೀತಿ ಹಾಗೂ ಸರ್ಕಾರ ಹಮ್ಮಿಕೊಂಡಿರುವ ಎಲ್ಲಾ ಕಾರ್ಯಕ್ರಮಗಳ ಬಗ್ಗೆ ಜನಜಾಗೃತಿ ಮೂಡಿಸಲು ಈ ಮೂರು ದಿವಸಗಳ ಛಾಯಾಚಿತ್ರ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ.ಎಂ.ವಿ.ವೆಂಕಟೇಶ್ ಅವರು ತಿಳಿಸಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಗರದ ತಾಲ್ಲೂಕು ಕಛೇರಿಯಲ್ಲಿ ಮೂರು ದಿನಗಳ ಕಾಲ ಆಯೋಜಿಸಿರುವ ರಾಜ್ಯ ಸರ್ಕಾರದ ನೂರು ದಿನಗಳ ಸಾಧನೆ ಕುರಿತಾದ ಛಾಯಾಚಿತ್ರಗಳ ಪ್ರದರ್ಶನವನ್ನು ವಿಕ್ಷೀಸಿ ಮಾತಾನಾಡಿದ ಅವರು ಕರ್ನಾಟಕ ಇಂದೆಂದು ಕಂಡರಿಯದ ನೆರೆಹಾವಳಿಯನ್ನು ಕಂಡಿದ್ದು, ಮುಖ್ಯ ಮಂತ್ರಿಗಳ ಮಾರ್ಗದರ್ಶನದಲ್ಲಿ ಸರ್ಕಾರ, ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತದವರೆಗೂ ಸಮರ್ಥವಾಗಿ ಕಾರ್ಯನಿರ್ವಹಿಸಿ ಸಾರ್ವಜನಿಕರ ದುಃಖಕ್ಕೆ ಸ್ಪಂದಿಸಿದೆ ಎಂದರು.
ನೆರೆಹಾವಳಿಯಿಂದಾಗಿ ಜನರು ಕಳೆದುಕೊಂಡ ಮನೆಗಳ ಪುನರ್ ವಸತಿ ವ್ಯವಸ್ಥೆ, ರಸ್ತೆ ಸಮಸ್ಯೆ, ಶಾಲೆಗಳ ಪುನರ್ ವಸತಿ ಮತ್ತು ದುರಸ್ಥಿ ಮುಂತಾದ ಸಮಸ್ಯೆಗಳಿಗೆ ಸರ್ಕಾರ ಹಲವಾರು ಯೋಜನೆಗಳನ್ನು ಹಾಕಿಕೊಂಡು ಸ್ಪಂದಿಸಿದ ರೀತಿ ನೀತಿಗಳನ್ನು ಈ ಪ್ರದರ್ಶನದಲ್ಲಿ ಕಾಣಬಹುದು.
ಜೊತೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಸಿಗುವಂತ ಸೌಲಭ್ಯಗಳು, ಆರೋಗ್ಯ ಇಲಾಖೆಯಿಂದ ಸಿಗುವ ಆಯುಷ್ಮಾನ್ ಭಾರತ್ ಯೋಜನೆ ಮತ್ತು ನೇಕಾರರ ಸಾಲಮನ್ನ ಮುಂತಾದ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಜಾಗೃತಿಯನ್ನು ಮೂಡಿಸುವಂತ ಕಾರ್ಯಕ್ರಮ ಇದಾಗಿದೆ.
ಸರ್ಕಾರದ ಹಲವು ಹತ್ತು ಕಾರ್ಯಕ್ರಮಗಳು ಸಾರ್ವಜನಿಕರಿಗೆ ತಲುಪಬೇಕಾದರೆ ಇಂತಹ ಜಾಗೃತಿ ಕಾರ್ಯಕ್ರಮಗಳ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿರುವ ಛಾಯಾಚಿತ್ರ ಪ್ರದರ್ಶನ ಕಾರ್ಯಕ್ರಮದ ಮೂಲಕ ಜನರು ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಜಾಗೃತಿ ಹಾಗೂ ಪ್ರಯೋಜನಗಳ ಪಡೆದುಕೊಂಡು ತಮ್ಮ ಆರ್ಥಿಕ ಬದುಕನ್ನು ಸುಧಾರಿಸಿಕೊಳ್ಳಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ವಾರ್ತಾಧಿಕಾರಿಗಳಾದ ಟಿ.ಕೆ.ಹರೀಶ್, ಮಂಡ್ಯ ತಹಶೀಲ್ದಾರ್ ನಾಗೇಶ್ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243