Connect with us

ದಿನದ ಸುದ್ದಿ

ಮಂಗಳೂರಿನ ಚರ್ಚ್ ಗಳನ್ನು ದ್ವಂಸ ಮಾಡಿದ್ದನೇ ಟಿಪ್ಪು? ಇತಿಹಾಸ ಏನು ಹೇಳುತ್ತೆ?

Published

on

  • ನವೀನ್ ಸೂರಿಂಜೆ

ಟಿಪ್ಪು ಕೊಡವರ ಹತ್ಯಾಕಾಂಡ ನಡೆಸಿರುವುದು ಸುಳ್ಳು ಎಂದು ಇತಿಹಾಸಕಾರರು ಹೇಳಿದ ನಂತರ ಇದೀಗ ಕರಾವಳಿ ಭಾಗದಲ್ಲಿ ಟಿಪ್ಪು ಕ್ರಿಶ್ಚಿಯನ್ನರ ಮರಣಹೋಮ ನಡೆಸಿದ್ದ ಎಂದು ಸುದ್ದಿ ಹರಿಬಿಡಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯೊಂದರಲ್ಲೇ 27 ಚರ್ಚುಗಳನ್ನು ಕೆಡವಿದ್ದ ಎಂದು ಸುದ್ದಿ ಹಬ್ಬಿಸಲಾಗ್ತಿದೆ. 1750 ರಲ್ಲಿ ಜನಿಸಿದ ಟಿಪ್ಪು ಸುಲ್ತಾನ್ ಕರಾವಳಿಯಲ್ಲಿ 1784 ರಿಂದ 1799 ರವರೆಗೆ ಅಧಿಪತ್ಯವನ್ನು ಸ್ಥಾಪಿಸಿದ್ದ.

ಈ ಸಂಧರ್ಭದಲ್ಲಿ ಕರಾವಳಿಯಲ್ಲಿ ಬ್ರಿಟೀಷರು ಹೆಚ್ಚು ಸಕ್ರೀಯಗೊಂಡಿದ್ದನ್ನು ಅರಿತಿದ್ದ. ಆ ಕಾರಣಕ್ಕಾಗಿ ಬ್ರಿಟೀಷರ ಪ್ರಾರ್ಥನಾ ಮಂದಿರಗಳ ಬಗ್ಗೆ ಒಂದು ರೀತಿಯ ಸಂಶಯದ ಗಮನವನ್ನು ಇಡುವುದು ಆಗಿನ ರಾಜನೀತಿಯಾಗಿತ್ತು. ಆದರೆ 27 ಚರ್ಚುಗಳನ್ನು ಕೆಡವಿದ್ದ ಎಂಬುದು ಸುಳ್ಳು ಇತಿಹಾಸ. ಅದಕ್ಕಾಗಿ 1784 ರಿಂದ ಟಿಪ್ಪು ಮರಣದವರೆಗೆ ಕರಾವಳಿಯಲ್ಲಿ ಇದ್ದ ಚರ್ಚುಗಳು ಯಾವುದು ಮತ್ತು ಅದರ ಇತಿಹಾಸ ಏನು ಹೇಳುತ್ತದೆ ಎಂಬುದನ್ನು ನೋಡಬೇಕು.

ಕರಾವಳಿಯ ಅತೀ ಪುರಾತನ ಚರ್ಚುಗಳಲ್ಲಿ ಮೊದಲನೆಯದಾಗಿ ಕಾಣುವುದು 1680 ರಲ್ಲಿ ಕಟ್ಟಲ್ಪಟ್ಟ ಹಂಪನಕಟ್ಟೆಯ ಮಿಲಾಗ್ರಿಸ್ ಚರ್ಚ್ ಮತ್ತು ಕಲ್ಯಾಣಪುರದ ಮಿಲಾಗ್ರಿಸ್ ಚರ್ಚ್. ಹಂಪನಕಟ್ಟೆಯ ಮಿಲಾಗ್ರಿಸ್ ಚರ್ಚನ್ನು ಟಿಪ್ಪು ಒಡೆದು ಹಾಕಿರೋ ಬಗ್ಗೆ ಎಲ್ಲೂ ಇತಿಹಾಸ ಹೇಳುವುದಿಲ್ಲ. ಟಿಪ್ಪು ಮರಣದ ನಂತರ ಬ್ರಿಟೀಷರು ಮಿಲಾಗ್ರಿಸ್ ಚರ್ಚನ್ನು ಹೆಚ್ಚು ದೊಡ್ಡದಾಗಿ ಕಟ್ಟಿದರು ಎಂದಷ್ಟೇ ಹೇಳುತ್ತದೆ.

ಅದಕ್ಕಿಂತಲೂ ಹೆಚ್ಚು ಕುತೂಹಲಕರವಾಗಿರೋದು ಮಿಲಾಗ್ರಿಸ್ ವ್ಯಾಪ್ತಿಯ ಸಾಲ್ವಡಾರ್ ಪಿಂಟೋ ಎಂಬ ಅಧಿಕಾರಿಯೇ ಟಿಪ್ಪುವಿನ ಕಾರ್ಯದರ್ಶಿ ಆಗಿದ್ದರು. ಟಿಪ್ಪು ಮರಣದ ನಂತರ ಫಾದರ್ ಮೆಂಡೇಝ್ ಮತ್ತು ಟಿಪ್ಪುವಿನ ಮಾಜಿ ಮುನ್ಶಿ(ಕಾರ್ಯದರ್ಶಿ) ಸಾಲ್ವಡಾರ್ ಪಿಂಟೋ ಜೊತೆ ಸೇರಿ 600 ರೂಪಾಯಿಗಳನ್ನು ಸಂಗ್ರಹಿಸಿ 1811 ರಲ್ಲಿ ವಿಶಾಲ ಮಿಲಾಗ್ರಿಸ್ ಚರ್ಚನ್ನು ಪುನರ್ ನಿರ್ಮಾಣ ಮಾಡಿದರು ಎಂದು ಇತಿಹಾಸ ಹೇಳುತ್ತದೆ. ಇಲ್ಲಿ ಮುಖ್ಯವಾದುದು ಟಿಪ್ಪುವಿನ ಕಾರ್ಯದರ್ಶಿ ಒಬ್ಬ ಕ್ರಿಶ್ಚಿಯನ್ ಆಗಿದ್ದರು ಮತ್ತು ಅವರು ಧರ್ಮಾಭಿಮಾನಿಯಾಗಿದ್ದರು ಎನ್ನುವುದು.

ಇನ್ನು ಉಡುಪಿಯ ಕಲ್ಯಾಣಪುರ ಚರ್ಚ್ ಕೂಡಾ 1680 ರಲ್ಲಿ ಪ್ರಾರಂಭವಾದರೂ ಟಿಪ್ಪುನಿಂದ ಕೆಡವಲ್ಪಟ್ಟಿಲ್ಲ. 1784 ರ ಅವಧಿಯಲ್ಲಿ ಟಿಪ್ಪು ಕರಾವಳಿಯ ಬ್ರಿಟೀಷರ ಆಶ್ರಯತಾಣವನ್ನು ಹುಡುಕಿಕೊಂಡು ಚರ್ಚುಗಳಿಗೆ ಬಂದಾಗ ಕಲ್ಯಾಣಪುರ ಚರ್ಚನ್ನು ಕೆಡವಿದ ಬಗ್ಗೆ ದಾಖಲೆಗಳು ಇಲ್ಲ.

ಇತಿಹಾಸ ಬದಿಗಿಟ್ಟು ಪವಾಡವನ್ನು ಗಮನಿಸಿದರೂ ಕಲ್ಯಾಣಪುರ ಮಿಲಾಗ್ರಿಸ್ ಚರ್ಚಿನ ಪವಾಡದ ಕತೆ ಹೀಗೆ ಹೇಳುತ್ತದೆ : ಟಿಪ್ಪು ಸುಲ್ತಾನ್ ಎಂಬ ರಾಜ ಬ್ರಿಟೀಷರನ್ನು ಹುಡುಕಿಕೊಂಡು ಕಲ್ಯಾಣಪುರ ಪವಾಡ ಮಾತೆಯ ಮಿಲಾಗ್ರಿಸ್ ಚರ್ಚಿಗೆ ದಾಳಿ ಮಾಡಲು ಬಂದ. ಆಗ ಎಲ್ಲೋ ಇದ್ದ ಜೇನು ನೊಣಗಳು ಟಿಪ್ಪುವಿನ ಸೈನ್ಯದ ಮೇಲೆ ಮುತ್ತಿಗೆ ಹಾಕಿದವು. ಸೈನಿಕರು ಓಡಿ ನದಿಯಲ್ಲಿ ಮುಳುಗಿದರೂ ಜೇನುನೊಣಗಳು ಬಿಡಲಿಲ್ಲ. ಕೊನೆಗೂ ಕಲ್ಯಾಣಪುರ ಪವಾಡ ಮಾತೆಯ ಚರ್ಚನ್ನು ಕೆಡವಲಾಗಲಿಲ್ಲ. ಇದು ಊರಿಡೀ ಪ್ರತೀತಿಯಾಗಿ ಹಿಂದೂಗಳು ಕೂಡಾ ಈ ಚರ್ಚನ್ನು ಮಿಲಾಗ್ರಿಯಮ್ಮನ ದೇವಸ್ಥಾನ ಎನ್ನಲಾರಂಬಿಸಿದ್ರು ಎಂಬುದು ಜನಪದೀಯ ಕತೆಯಾಗಿದೆ.

ಇದರ ಬಳಿಕ ಅತ್ಯಂತ ಪುರಾತನ ಚರ್ಚುಗಳ ಪೈಕಿ ನಮಗೆ ಕಾಣಸಿಗುವುದು ಮೂಡಬಿದ್ರೆಯ ಹೊಸಬೆಟ್ಟು ಚರ್ಚ್. 1761 ರಲ್ಲಿ ನಿರ್ಮಾಣಗೊಂಡ ಚರ್ಚಿನ ಇತಿಹಾಸವನ್ನು ಓದಿದಾಗ ಟಿಪ್ಪುವಿನ ಉಲ್ಲೇಖಗಳು ಬರುತ್ತದೆ. ಮೂಡಬಿದ್ರೆಯ ಜೈನ ಅರಸನ ವ್ಯಾಪ್ತಿಗೂ ಬರುತ್ತಿದ್ದ ಈ ಚರ್ಚು ಸ್ಥಳೀಯ ಅರಸನ ಕೆಂಗಣ್ಣಿಗೆ ಗುರಿಯಾಗಿತ್ತು. ಟಿಪ್ಪು ಹಲವು ಚರ್ಚುಗಳ ಬಗ್ಗೆ ಅಸಮಾದಾನ ಹೊಂದಿದ್ದರೂ ಈ ಚರ್ಚಿನ ಉಸಾಬರಿಗೆ ಬಂದಿಲ್ಲ ಎಂದು ಚರ್ಚ್ ಇತಿಹಾಸ ಸ್ಪಷ್ಟವಾಗಿ ಹೇಳುತ್ತದೆ.

1784 ಎಂಬುದು ಟಿಪ್ಪು ಇತಿಹಾಸದಲ್ಲಿ ಅತ್ಯಂತ ಪ್ರಮುಖ ಸಂಧರ್ಭ. ಇದೇ ಇಸವಿಯಲ್ಲಿ ಆತ ಬ್ರಿಟೀಷರನ್ನು ಹತ್ತಿಕ್ಕುವುದಕ್ಕಾಗಿ ಚರ್ಚ್ ಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವ ನಿರ್ಧಾರ ಮಾಡಿ ಕರಾವಳಿಯಾದ್ಯಂತ ಸೈನಿಕರ ಜೊತೆ ಪರ್ಯಟಣೆ ಮಾಡುತ್ತಾನೆ. ಇದೇ ಸಮಯದಲ್ಲಿ ಅಂದರೆ 1784 ರಲ್ಲಿಯೇ ಕಿನ್ನಿಗೋಳಿ ಸಮೀಪ ಐಕಳದಲ್ಲಿ ಕಿರೆಂ ಚರ್ಚ್ ಅನ್ನು ಕಟ್ಟಲಾಗುತ್ತದೆ. ಚರ್ಚ್ ಕಟ್ಟುತ್ತಿರೋ ಬಗ್ಗೆ ಟಿಪ್ಪು ಗಮನಕ್ಕೆ ಬಂದು ಚರ್ಚ್ ಸ್ಥಳಕ್ಕೆ ಟಿಪ್ಪು ಸೈನಿಕರ ಜೊತೆ ಬರುತ್ತಾನೆ.

ನೇರವಾಗಿ ಚರ್ಚಿಗೆ ದಾಳಿ ಮಾಡುವ ಎಲ್ಲಾ ಅವಕಾಶಗಳು ಟಿಪ್ಪುವಿನಂತಹ ರಾಜನಿದ್ದರೂ ಆತ ಅದನ್ನು ಮಾಡದೇ ಸ್ಥಳೀಯ ಆಡಳಿತವನ್ನು ನೋಡಿಕೊಳ್ಳುತ್ತಿದ್ದ ಐಕಳಬಾವ, ತಾಳಿಪಾಡಿ ಗುತ್ತು, ಏಳಿಂಜೆ ಗುತ್ತಿನ ಬಂಟ ಮನೆತನದವರನ್ನು ಕರೆಸಿ ಮಾತನಾಡುತ್ತಾನೆ. ಬಂಟ ಮನೆತನಗಳವರು ಚರ್ಚಿನ ಬಗ್ಗೆ ಉತ್ತಮ ಅಭಿಪ್ರಾಯವನ್ನು ವ್ಯಕ್ತಪಡಿಸುವುದಲ್ಲದೆ, ಈ ಚರ್ಚಿಗೆ ನಡೆದುಕೊಳ್ಳುವ ಕ್ರಿಶ್ಚಿಯನ್ನರು ಯಾರೂ ಕೂಡಾ ಬ್ರಿಟೀಷರ ಜೊತೆ ಕೈ ಜೋಡಿಸಿಲ್ಲ ಮತ್ತು ಇವರೂ ನಮ್ಮಂತೆ ಕೃಷಿಕರು ಎಂಬುದನ್ನು ಮನವರಿಕೆ ಮಾಡಿಕೊಡುತ್ತಾರೆ. ತನ್ನ ರಾಜ್ಯದ ಹಿತದೃಷ್ಟಿಯಿಂದ ತನಿಖೆ ನಡೆಸಿದ ಟಿಪ್ಪು, ಆ ಚರ್ಚಿಗೆ ಯಾವ ತೊಂದರೆಯನ್ನೂ ಮಾಡದೇ ಮರಳುತ್ತಾನೆ. ಅದರ ನೆನಪಿಗಾಗಿ ಈಗಲೂ ಪ್ರತೀ ವರ್ಷ ನವೆಂಬರ್ 25 ರಂದು ಈ ಗುತ್ತಿನ ಮನೆತನಗಳಿಗೆ ಬಾಳೆಗೊನೆಯನ್ನು ಇಲ್ಲಿನ ಧರ್ಮಗುರುಗಳು ನೀಡುತ್ತಾ ಬಂದಿದ್ದಾರೆ.

ಟಿಪ್ಪು ಕ್ರಿಶ್ಚಿಯನ್ ವಿರೋಧಿಯಾಗಿರಲಿಲ್ಲ ಎನ್ನುವುದಕ್ಕೆ ಮತ್ತೊಂದು ಉದಾಹರಣೆ ಜಮಲಾಬಾದ್ ಕೋಟೆ
ಮತ್ತು ಅದರ ಸನಿಹದಲ್ಲಿರುವ ಚರ್ಚ್. 1682 ರಲ್ಲಿ ಹಿಂದೂ ಮರಾಠ ರಾಜ ಸಾಂಭಾಜಿ ಗೋವಾವನ್ನು ಆಕ್ರಮಿಸಿದಾಗ ಕ್ರಿಶ್ಚಿಯನ್ನರು ನಿರಾಶ್ರಿತರಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಗಡಾಯ್ ಕಲ್ಲು ಎಂಬಲ್ಲಿ ಆಶ್ರಯ ಪಡೆಯುತ್ತಾರೆ. ಅದೇ ಗಡಾಯಿಕಲ್ ಪ್ರದೇಶದಲ್ಲಿ ಟಿಪ್ಪು ಜಮಲಾಬಾದ್ ಕೋಟೆಯನ್ನು ಕಟ್ಟುತ್ತಾನೆ. ಆ ಕೋಟೆಯ ಸುತ್ತಮುತ್ತ ಹಳ್ಳಿಗಳಲ್ಲಿ ಕ್ರಿಶ್ಚಿಯನ್ನು ಇರುತ್ತಾರೆ. ಟಿಪ್ಪು ಕ್ರಿಶ್ಚಿಯನ್ ವಿರೋಧಿ ಆಗಿದ್ದಿದ್ರೆ ಜಮಲಾಬಾದ್ ಕೋಟೆಯ ಸುತ್ತಾಮುತ್ತ ಕ್ರಿಶ್ಚಿಯನ್ನರು ಯಾಕೆ ವಾಸವಾಗ್ತಿದ್ರು ಎಂಬ ಪ್ರಶ್ನೆ ಬರುತ್ತದೆ.

ಅಲ್ಲೇ ಸಣ್ಣ ಗುಡಿಸಲು ರೀತಿಯಲ್ಲಿ ಚರ್ಚ್ ಕೂಡಾ ನಿರ್ಮಿಸಿ ಪ್ರಾರ್ಥನೆ ನಡೆಸುತ್ತಿರುತ್ತಾರೆ. ಯಾವ ಯುದ್ದವೂ ಕ್ರಿಶ್ಚಿಯನ್ನರ ಮೇಲಾಗಲೀ, ಗುಡಿಸಲಿನ ಚರ್ಚಿನ ಮೇಲಾಗಲೀ ಪರಿಣಾಮ ಬೀರದಂತೆ ಟಿಪ್ಪು ನೋಡಿಕೊಳ್ಳುತ್ತಾನೆ. ಟಿಪ್ಪು 1799 ರಲ್ಲಿ ಮರಣ ಹೊಂದಿದ ಬಳಿಕವೂ ಚರ್ಚ್ ಅಲ್ಲೇ ಇರುತ್ತದೆ. 1885 ರ ವೇಳೆಗೆ ಜಮಲಾಬಾದ್ ಕೋಟೆಯ ಸುತ್ತ ಇದ್ದ ಪ್ರದೇಶದಲ್ಲಿ ಕಾಯಿಲೆ ವ್ಯಾಪಿಸಿದ್ದರಿಂದ ಚರ್ಚ್ ಅನ್ನು ಸ್ವಲ್ಪ ದೂರಕ್ಕೆ ಸ್ಥಳಾಂತರಿಸಲಾಯ್ತು.

1784 ರಿಂದ 1799 ರವರೆಗೆ ಕರಾವಳಿಯಲ್ಲಿದ್ದ ಚರ್ಚ್ ಗಳು ಮೂರ್ನಾಲ್ಕು ಮಾತ್ರ. ಉಳಿದಂತೆ ಹಳ್ಳಿಗಳಲ್ಲಿ ಇದ್ದ ಕ್ರಿಶ್ಚಿಯನ್ನರು ದೊಡ್ಡ ಮನೆಯನ್ನು ಆಯ್ಕೆಮಾಡಿಕೊಂಡು ಸಾಮೂಹಿಕ ಪ್ರಾರ್ಥನೆಗೆ ಒಂದೆಡೆ ಸೇರುತ್ತಿದ್ದರು. ಉದಾಹರಣೆಗೆ ಎಸ್ ಇ ಝಡ್ ವಿರೋಧಿ ಹೋರಾಟಗಾರ ಕಳವಾರಿನ ಗ್ರೆಗೋರಿ ಪತ್ರಾವೋ ಮನೆ.

ನಂತರದ ಚರ್ಚುಗಳಿಗೂ ಟಿಪ್ಪುವಿಗೂ ಸಂಬಂಧವೇ ಇಲ್ಲ. ಕಿನ್ನಿಗೋಳಿ ಚರ್ಚ್ 1804 ರಲ್ಲೂ, ಕುಲಶೇಖರ ಕೋರ್ಡೆಲ್ ಚರ್ಚ್ ಮತ್ತು ಬೋಂದೆಲ್ ಚರ್ಚ್ 1873 ರಲ್ಲೂ, ಬೆಳ್ಮನ್ ಚರ್ಚ್ 1894, ಪಾಲಡ್ಕ ಚರ್ಚ್ 1913, ಬಳ್ಕುಂಜೆ ಚರ್ಚ್ 1915, ನಿಡ್ಡೋಡಿ ಚರ್ಚ್ 1937, ನೀರುಡೆ ಚರ್ಚ್ 1945, ಬೋಳ ಚರ್ಚ್ 1964, ಕಟೀಲು ಚರ್ಚ್ 1971, ಮುಂಡ್ಕೂರು ಚರ್ಚ್ 1998 ರಲ್ಲೂ ಪ್ರಾರಂಭವಾಯ್ತು.

ಇದ್ಯಾವುದೂ ಟಿಪ್ಪು ಕಾಲಮಾನದಲ್ಲಿ ಸ್ಥಾಪನೆಯಾದ ಚರ್ಚುಗಳು ಅಲ್ಲ. ಟಿಪ್ಪು ಕಾಲಮಾನದ ಯಾವ ಚರ್ಚಿನ ಇತಿಹಾಸವೂ ಚರ್ಚು ಕೆಡವಿದ ಕತೆಯನ್ನು ಹೇಳುವುದಿಲ್ಲ. ಬದಲಾಗಿ ಬ್ರಿಟೀಷರ ಕಾರಣಕ್ಕಾಗಿ ಚರ್ಚುಗಳ ಪರಿಶೀಲನೆ ನಡೆಸಿದ್ದ ಮತ್ತು ಮನವರಿಕೆಯಾದ ನಂತರ ರಕ್ಷಣೆ ಮಾಡಿದ್ದ ಎಂದಷ್ಟೇ ಇತಿಹಾಸ ಮತ್ತು ಕ್ರಿಶ್ಚಿಯನ್ ಪ್ರಚಲಿತ ಪವಾಡದ ಕತೆಗಳು ಹೇಳುತ್ತದೆ. ಟಿಪ್ಪು ಚರ್ಚ್ ಗಳನ್ನು ಕೆಡವಿದ್ದ ಎನ್ನುವುದು ಇತಿಹಾಸಕ್ಕೂ, ಚರ್ಚಿನ ಪವಾಡಕ್ಕೂ ಮಾಡುವ ಅಪಚಾರವಾಗುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ

Published

on

ಸುದ್ದಿದಿನ,ಚನ್ನಗಿರಿ: ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯು ಸೋಮೌಅರ ನವಿಲೇಹಾಳು ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಭೇಟಿಯಾಗಿ ಗ್ರಾಮಸಭೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸುವಂತೆ ಮನವಿ ಪತ್ರ ಸಲ್ಲಿಸಲಾಯಿತು.

ಗ್ರಾಮಸಭೆ ಎಂಬುದು ಗ್ರಾಮಸ್ಥರ ಸಮಸ್ಯೆಗಳನ್ನು ನೇರವಾಗಿ ಚರ್ಚಿಸಿ, ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸುವ ಪ್ರಮುಖ ವೇದಿಕೆಯಾಗಿರುವುದರಿಂದ, ಗ್ರಾಮಸಭೆಯ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು PDO ಅವರಿಗೆ ಮನವಿ ಮಾಡಲಾಯಿತು.

ಅದರಂತೆ ಗ್ರಾಮಸಭೆಯ ದಿನಾಂಕ, ಸಮಯ ಹಾಗೂ ಸ್ಥಳದ ಮಾಹಿತಿಯನ್ನು ಟಾಂಟಾಂ/ಧ್ವನಿವರ್ಧಕದ ಮೂಲಕ ಗ್ರಾಮದಲ್ಲಿ ವ್ಯಾಪಕವಾಗಿ ಪ್ರಚಾರ ಮಾಡುವುದರ ಜೊತೆಗೆ, ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅರ್ಹ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸುವಂತೆ ತಿಳಿಸಲಾಯಿತು.

ಗ್ರಾಮದಲ್ಲಿಯೇ ಉದ್ಯೋಗ ಸೃಷ್ಟಿಗೆ ಒತ್ತು

ಇದೇ ಸಂದರ್ಭದಲ್ಲಿ ಮನರೇಗಾ (MGNREGA) ಯೋಜನೆಯಡಿ ಗ್ರಾಮದ ಅರ್ಹ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವಂತೆ ಮನವಿ ಮಾಡಲಾಯಿತು.

ಗ್ರಾಮಸ್ಥರು ಉದ್ಯೋಗಕ್ಕಾಗಿ ಅನಿವಾರ್ಯವಾಗಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ, ಸರ್ಕಾರದ ಉದ್ಯೋಗ ಖಾತರಿ ಯೋಜನೆಯಡಿ ಲಭ್ಯವಿರುವ ಕೆಲಸಗಳನ್ನು ಸಮರ್ಪಕವಾಗಿ ಗುರುತಿಸಿ, ಅರ್ಹರಿಗೆ ನಿಯಮಾನುಸಾರ ಉದ್ಯೋಗ ಒದಗಿಸಬೇಕು ಎಂದು ತಿಳಿಸಲಾಯಿತು.

ಪ್ರಸ್ತುತ ಬತ್ತದ ನಾಟಿ ಕಾರ್ಯಕ್ಕೆ ಅಗತ್ಯವಿರುವ ನೀರಿನ ಸಮಸ್ಯೆಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೃಷಿ ಕೆಲಸಗಳು ಲಭ್ಯವಿಲ್ಲದ ಅವಧಿಯಲ್ಲಿ ಗ್ರಾಮಸ್ಥರಿಗೆ ಮನರೇಗಾ ಸೇರಿದಂತೆ ಇತರೆ ಸರ್ಕಾರಿ ಯೋಜನೆಗಳ ಮೂಲಕ ಉದ್ಯೋಗ ಒದಗಿಸಿ, ಗ್ರಾಮದಲ್ಲಿಯೇ ಆದಾಯದ ಅವಕಾಶಗಳನ್ನು ಸೃಷ್ಟಿಸುವುದು ಅಗತ್ಯವಾಗಿದೆ ಎಂದು ಮನವಿ ಮಾಡಲಾಯಿತು.

ಗ್ರಾಮದಲ್ಲಿಯೇ ಉದ್ಯೋಗ ದೊರೆತರೆ ಗ್ರಾಮಸ್ಥರ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ, ಗುಳೆ ಹೋಗುವುದನ್ನು ತಡೆಯಲು ಹಾಗೂ ಗ್ರಾಮದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು PDO ಅವರ ಗಮನಕ್ಕೆ ತರಲಾಯಿತು.

ಇತರೆ ಗ್ರಾಮಾಭಿವೃದ್ಧಿ ವಿಚಾರಗಳ ಚರ್ಚೆ

ಇದರ ಜೊತೆಗೆ ನವಿಲೇಹಾಳ ಗ್ರಾಮದ ವಿವಿಧ ಅಭಿವೃದ್ಧಿ ಸಮಸ್ಯೆಗಳು, ಸಾರ್ವಜನಿಕರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳು, ಉದ್ಯೋಗಾವಕಾಶಗಳು, ಕೃಷಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು PDO ಅವರೊಂದಿಗೆ ಚರ್ಚಿಸಲಾಯಿತು.

ಗ್ರಾಮಸ್ಥರಿಗೆ ಸರ್ಕಾರದ ಯೋಜನೆಗಳ ಪ್ರಯೋಜನಗಳು ಸಮರ್ಪಕವಾಗಿ ತಲುಪುವಂತೆ ಪಾರದರ್ಶಕವಾಗಿ ಹಾಗೂ ನಿಯಮಾನುಸಾರ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಲಾಯಿತು.

ಗ್ರಾಮಸಭೆಯಲ್ಲಿ ಸಾರ್ವಜನಿಕರ ಹೆಚ್ಚಿನ ಭಾಗವಹಿಸುವಿಕೆ, ಸ್ಥಳೀಯ ಉದ್ಯೋಗ ಸೃಷ್ಟಿ ಹಾಗೂ ಗ್ರಾಮಾಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಮೂಲಕ ನವಿಲೇಹಾಳ ಗ್ರಾಮವನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.

“ಗ್ರಾಮದ ಅಭಿವೃದ್ಧಿ ಕೇವಲ ಸರ್ಕಾರದ ಜವಾಬ್ದಾರಿಯಲ್ಲ; ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಒಗ್ಗೂಡಿ ಕಾರ್ಯನಿರ್ವಹಿಸಿದಾಗ ಮಾತ್ರ ಸಮಗ್ರ ಗ್ರಾಮಾಭಿವೃದ್ಧಿ ಸಾಧ್ಯ.”

ಗ್ರಾಮದ ಜನರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ನವಿಲೇಹಾಳ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ (ರಿ.) ನಿರಂತರವಾಗಿ ಜನಪರವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ದಾವಣಗೆರೆ ಜಿಲ್ಲಾಧ್ಯಕ್ಷರಾದ ಜಾಫರ್ ರವರು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ಅಂತರಂಗ

ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು

Published

on

~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ

ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.

ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.

 

ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.

ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

Continue Reading

ದಿನದ ಸುದ್ದಿ

ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್

Published

on

ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.

ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್‌ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.

ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.

“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.

ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.

“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.

ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.

ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.

ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending