ದಿನದ ಸುದ್ದಿ
ಪೊಲೀಸರಿಂದ ಕಾನೂನಿನ ಅತ್ಯಾಚಾರ
- ದಿನೇಶ್ ಅಮಿನ್ ಮಟ್ಟು
ಹತ್ರಾಸ್ ನಲ್ಲಿ ಮೇಲ್ಜಾತಿಯ ದುರುಳರಿಂದ ಅತ್ಯಾಚಾರಕ್ಕೊಳಗಾಗಿ ಸಾವಿಗೀಡಾದ ಯುವತಿಯ ಅಂತ್ಯಕ್ರಿಯೆಯನ್ನು ಪೊಲೀಸರು ತಂದೆ-ತಾಯಿಗೆ ಮಗಳ ಮುಖವನ್ನೂ ನೋಡಲು ಅವಕಾಶ ನೀಡದೆ ಅವಸರದಲ್ಲಿ ನಡುರಾತ್ರಿಯೇ ಅಂತ್ಯಕ್ರಿಯೆಯನ್ನು ಮುಗಿಸಿದರು. ಯಾಕೆ?
ನಮ್ಮ ಭವ್ಯಭಾರತದಲ್ಲಿ ಅತ್ಯಾಚಾರದ ನೂರು ಪ್ರಕರಣಗಳಲ್ಲಿ ಕೇವಲ 27 ಪ್ರಕರಣಗಳಲ್ಲಿ ಮಾತ್ರ ಅಪರಾಧಿಗಳಿಗೆ ಶಿಕ್ಷೆಯಾಗುತ್ತದೆ. 2018ರಲ್ಲಿ ಪೊಲೀಸ್ ಇಲಾಖೆಯಲ್ಲಿ ದಾಖಲಾಗಿದ್ದು 1,56,327 ರೇಪ್ ಪ್ರಕರಣಗಳು.
ಅವುಗಳಲ್ಲಿ ವಿಚಾರಣೆ ಪೂರ್ಣಗೊಂಡ ಪ್ರಕರಣಗಳು 17,313 ಮಾತ್ರ. ಇವುಗಳಲ್ಲಿ 11,133 ಪ್ರಕರಣಗಳ ಆರೋಪ ಪಟ್ಟಿ ಸಲ್ಲಿಕೆಯಾಗುವ ಮೊದಲೇ ಆರೋಪಿಗಳು ಬಿಡುಗಡೆಯಾಗಿದ್ದರು, 1472 ಪ್ರಕರಣಗಳಲ್ಲಿ ಆರೋಪಿಗಳು ವಿಚಾರಣೆ ನಡೆದು ದೋಷಮುಕ್ತರಾಗಿದ್ದರು.
ಆರೋಪಿಗಳು ದೋಷಮುಕ್ತರಾಗಲು ಒಂದು ಕಾರಣ ಏನೆನ್ನುವುದು ಬುಧವಾರ ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪನ್ನು ನೋಡಿದವರಿಗೆ ಮನವರಿಕೆಯಾಗಿರಬಹುದು. ಇನ್ನೊಂದು ಪ್ರಮುಖ ಕಾರಣ ನ್ಯಾಯಾಲಯಕ್ಕೆ ಪೊಲೀಸರು ಸಲ್ಲಿಸುವ ಆರೋಪಪಟ್ಟಿಯಲ್ಲಿನ ದೋಷಗಳು.
ಅತ್ಯಾಚಾರದಂತಹ ಪ್ರಕರಣಗಳಲ್ಲಿ ಶೇಕಡಾ 90ರಷ್ಟು ಪ್ರಕರಣಗಳು ಪೊಲೀಸ್ ಇಲಾಖೆಯಲ್ಲಿ ಎಫ್ ಐ ಆರ್ ದಾಖಲಾಗಿ ಆರೋಪ ಪಟ್ಟಿ ಸಿದ್ದಗೊಂಡು ನ್ಯಾಯಾಲಯಕ್ಕೆ ಸಲ್ಲಿಸುವ ಹಂತದಲ್ಲಿ ಸತ್ತು ಹೋಗಿರುತ್ತವೆ.
ಸರ್ಕಾರ ವಿಶೇಷ ಆಸಕ್ತಿ ವಹಿಸಿದರೆ, ಪಬ್ಲಿಕ್ ಪ್ರಾಸಿಕ್ಯೂಟರ್ ಗಳೇನಾದರೂ ಕಸಬುದಾರ ವಕೀಲರಂತೆ ವೃತ್ತಿನಿಷ್ಠೆಯಿಂದ ಕಾರ್ಯನಿರ್ವಹಿಸಿದರೆ ಸತ್ತುಹೋಗಿರುವ ಒಂದಷ್ಟು ಪ್ರಕರಣಗಳಿಗೆ ಜೀವ ತುಂಬಬಹುದು. ಅವರೂ ವ್ಯವಸ್ಥೆಯ ಜೊತೆ ಷಾಮೀಲಾಗಿದ್ದರೆ ಆತನೂ ಸೇರ್ಕೊಂಡು ಉಳಿದ ಪ್ರಕರಣಗಳನ್ನು ಮುಗಿಸಿಬಿಡುತ್ತಾರೆ.
ಅಪರಾಧಿಗಳನ್ನು ರಕ್ಷಿಸಲು ಪೊಲೀಸರು ನಿರ್ಧರಿಸಿದರೆ ಅವರು ಮೊದಲು ಸಾಕ್ಷ್ಯ ನಾಶಕ್ಕೆ ಇಳಿಯುತ್ತಾರೆ. ಹತ್ರಾಸ್ ನಲ್ಲಿ ಅತ್ಯಾಚಾರಕ್ಕೊಳಗಾಗಿ ಸಾವಿಗೀಡಾದ ದಲಿತ ಯುವತಿಯ ಪ್ರಕರಣವನ್ನು ಸೂಕ್ಷ್ಮವಾಗಿ ಗಮನಿಸಿದರೆ ಇದು ಸ್ಪಷ್ಟವಾಗುತ್ತದೆ.
ಸೆಪ್ಟೆಂಬರ್ ಹದಿನಾಲ್ಕರಂದು ತನ್ನ ಮನೆ ಸಮೀಪದ ಕಾಡಲ್ಲಿ ಈ ದಲಿತ ಯುವತಿಯ ಮೇಲೆ ಊರಿನ ಮೇಲ್ಜಾತಿಯ ನಾಲ್ವರು ದುಷ್ಕರ್ಮಿಗಳು ಅತ್ಯಾಚಾರ ಎಸಗುತ್ತಾರೆ.
ಅಲ್ಲಿಂದಲೇ ಸಾಕ್ಷ್ಯ ನಾಶದ ಕೆಲಸ ಪ್ರಾರಂಭವಾಗುತ್ತದೆ. ಆ ಯುವತಿ ಒಂದೆರಡು ವರ್ಷ ಮಾತ್ರ ಶಾಲೆಗೆ ಹೋಗಿದ್ದಳಂತೆ. ಓದಲು ಬರೆಯಲು ಗೊತ್ತಿದ್ದ ಹಾಗೆ ಕಾಣುತ್ತಿಲ್ಲ. ಇದರಿಂದಾಗಿ ಮೌಖಿಕ ಹೇಳಿಕೆಯನ್ನಷ್ಟೇ ನೀಡಲು ಸಾಧ್ಯವಿತ್ತು. ಅದಕ್ಕಾಗಿ ನಾಲಗೆಯನ್ನು ಕತ್ತರಿಸಲಾಗಿತ್ತು.
ಅಲ್ಲಿಂದ ಪೊಲೀಸರ ಪ್ರವೇಶವಾಗುತ್ತದೆ. ಅಷ್ಟರಲ್ಲಿ ಯುವತಿ ಅಪರಾಧಿಗಳ ಹೆಸರನ್ನು ಹೇಳಿರುತ್ತಾಳೆ, ನಾಲ್ವರ ಬಂಧನವೂ ಆಗಿರುತ್ತದೆ. ಮಾಧ್ಯಮಗಳಲ್ಲಿ ವರದಿ ಬರತೊಡಗುತ್ತದೆ. ಇದೇನು ಕೈಮೀರಿ ಹೋಗುತ್ತಿದೆ ಎಂದನಿಸಿದಾಗ ಹೆತ್ತವರಿಗೆ ಮನವರಿಕೆ ಮಾಡಿ ಸ್ಥಳೀಯ ಆಸ್ಪತ್ರೆಯಲ್ಲಿದ್ದ ಆಕೆಯನ್ನು ದಿಡೀರನೆ ದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆಗೆ ಸಾಗಿಸುತ್ತಾರೆ. ಹೋಗುವ ಮೊದಲು ಆಕೆ ತಾಯಿಯ ಜೊತೆ, ಹುಷಾರಾಗಿ ಬರ್ತೇನೆ ಎಂದು ಹೇಳಿ ಹೋಗಿದ್ದಳಂತೆ.
ಹದಿನಾಲ್ಕು ದಿನ ಆಸ್ಪತ್ರೆಯಲ್ಲಿದ್ದು ಚೇತರಿಸಿಕೊಳ್ಳುತ್ತಿದ್ದ ಯುವತಿ ದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆ ಸೇರಿದ ಹದಿನೈದು ಗಂಟೆಗಳಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆಯುತ್ತಾಳೆ. ತಕ್ಷಣ ಹತ್ರಾಸ್ ಜಿಲ್ಲೆಯ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಸ್ಪತ್ರೆಗೆ ಧಾವಿಸುತ್ತಾರೆ. ಹೆತ್ತವರಿಗೆ ಸಾವಿನ ಸುದ್ದಿ ತಿಳಿಸಿ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಅದರ ನಂತರ ಹೆತ್ತವರನ್ನು ದೂರ ಇಟ್ಟು ಯುವತಿಯ ಅಂತ್ಯಕ್ರಿಯೆ ನಡೆಸಲಾಗುತ್ತದೆ.
ಗಮನಿಸಬೇಕಾದ ಸಂಗತಿ ಎಂದರೆ ಇಲ್ಲಿಯ ವರೆಗೆ ಪೊಲೀಸರು ಹೆತ್ತವರಿಗೆ ಯುವತಿಯ ಮೃತದೇಹದ ಮರಣೋತ್ತರ ಪರೀಕ್ಷೆಯ ವರದಿಯನ್ನು ನೀಡಿಲ್ಲ. ಇಷ್ಟೆಲ್ಲ ತಂತ್ರ-ಕುತಂತ್ರಗಳನ್ನು ನಡೆಸಿದವರು ತ ಮರಣೋತ್ತರ ಪರೀಕ್ಷೆಯಲ್ಲಿಯೂ ಕೈಯಾಡಿಸಿರುವ ಸಾಧ್ಯತೆಗಳು ಖಂಡಿತ ಇದೆ. ಸಂಶಯಗೊಂಡು ಹೆತ್ತವರು ಮರು ಮರಣೋತ್ತರ ಪರೀಕ್ಷೆಗೆ ಒತ್ತಾಯಿಸಬಾರದೆಂದೇ ಅವಸರದಲ್ಲಿ ಅಂತ್ಯಕ್ರಿಯೆ ನಡೆಸಿ ಅಳಿದುಳಿದ ಸಾಕ್ಷ್ಯಗಳನ್ನು ನಾಶ ಮಾಡಲಾಗಿದೆ.
ಸಾಮಾನ್ಯವಾಗಿ ಮೆಡಿಕೋ-ಲೀಗಲ್ ಪ್ರಕರಣಗಳಲ್ಲಿ ಮೃತದೇಹದ ಅಂತ್ಯಕ್ರಿಯೆಯನ್ನು ಹೇಗೆ ಮಾಡಬೇಕೆಂಬುದನ್ನು ಹೆತ್ತವರು/ಪೋಷಕರು ನಿರ್ಧರಿಸಬೇಕು. ಈ ಪ್ರಕರಣದಲ್ಲಿ ಮರಣೋತ್ತರ ಪರೀಕ್ಷೆಗೆ ಮೊದಲು ಪೊಲೀಸರು ಒಂದಷ್ಟು ಕಾಗದಪತ್ರಗಳಿಗೆ ಯುವತಿಯ ತಂದೆಯ ಸಹಿಹಾಕಿಸಿದ್ದಾರೆ.
ಅನಕ್ಷರಸ್ಥ ತಂದೆ ಹೇಳಿಕೆಯನ್ನು ಖಂಡಿತ ಓದಿರುವುದಿಲ್ಲ, ಪೊಲೀಸರು ಓದಿ ಹೇಳಿದ್ದನ್ನು ಒಪ್ಪಿಕೊಂಡಿರಬಹುದು. ಅದರಲ್ಲಿ ಮಗಳ ಮೃತದೇಹವನ್ನು ಸುಡಲು ಒಪ್ಪಿಗೆ ನೀಡಿದ್ದ ಪತ್ರಕ್ಕೂ ಅವರು ಸಹಿಹಾಕಿರಬಹುದು. ಅದನ್ನೇ ಪೊಲೀಸರು ಈಗ ‘’ ತಂದೆಯ ಒಪ್ಪಿಗೆಯ ಮೇಲೆಯೇ ಮೃತದೇಹದ ಅಂತ್ಯಕ್ರಿಯೆ ನಡೆಸಲಾಗಿದೆ’ ಎಂದು ಹೇಳುತ್ತಿರುವುದು.
ಈಗಾಗಲೇ ಪೊಲೀಸರ ಹೇಳಿಕೆಗಳ ಧಾಟಿ ಬದಲಾಗಿದೆ. ಮೊದಲನೆಯದಾಗಿ ಯುವತಿಯ ಮೇಲೆ ರೇಪ್ ನಡೆದಿಲ್ಲ, ರೇಪ್ ಗೆ ಪ್ರಯತ್ನಿಸಲಾಗಿದೆ ಎಂದು ಹೇಳತೊಡಗಿದ್ದಾರೆ, ಇದರ ಜೊತೆಗೆ ಯುವತಿಯ ನಾಲಗೆ ಕತ್ತರಿಸಲಾಗಿಲ್ಲ ಎಂದೂ ಹೇಳತೊಡಗಿದ್ದಾರೆ. ಪೊಲೀಸರು ನಾಳೆ ಅಧಿಕೃತವಾಗಿ ಈ ಹೇಳಿಕೆ ನೀಡಿದರೆ ಇದು ಸುಳ್ಳೆಂದು ಸಾಬೀತುಪಡಿಸುವುದು ಹೇಗೆ? ಮೃತದೇಹ ಸುಟ್ಟು ಬೂದಿಯಾಗಿದೆ.
ಇದನ್ನೇ “ ಪೊಲೀಸರಿಂದ ಕಾನೂನಿನ ಅತ್ಯಾಚಾರ” ಎಂದು ಹೇಳಲಾಗುತ್ತಿದೆ.ಯುಪಿ ಪೊಲೀಸರು ಈ ಕಲೆಯಲ್ಲಿ ವರ್ಷದಿಂದ ಪಳಗಿ ಬಿಟ್ಟಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.
ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.
ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ
ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್, ಚೇತನ್ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.
ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.
ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.
ಹೌದು! 2023ರ ಆಗಸ್ಟ್ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.
http://Visit : www.suddidina.com
ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ:
ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.
ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.
ಕುಟುಂಬದ ಬಜೆಟ್ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:
ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.
ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.




