Connect with us

ದಿನದ ಸುದ್ದಿ

ಪೊಲೀಸರಿಂದ ಕಾನೂನಿನ ಅತ್ಯಾಚಾರ

Published

on

ಅತ್ಯಾಚಾರ ಸಂತ್ರಸ್ತೆ ಮನಿಶಾ ಶವ ಸುಡುತ್ತಿರುವುದು
  • ದಿನೇಶ್ ಅಮಿನ್ ಮಟ್ಟು

ತ್ರಾಸ್ ನಲ್ಲಿ ಮೇಲ್ಜಾತಿಯ ದುರುಳರಿಂದ ಅತ್ಯಾಚಾರಕ್ಕೊಳಗಾಗಿ ಸಾವಿಗೀಡಾದ ಯುವತಿಯ ಅಂತ್ಯಕ್ರಿಯೆಯನ್ನು ಪೊಲೀಸರು ತಂದೆ-ತಾಯಿಗೆ ಮಗಳ ಮುಖವನ್ನೂ ನೋಡಲು ಅವಕಾಶ ನೀಡದೆ ಅವಸರದಲ್ಲಿ ನಡುರಾತ್ರಿಯೇ ಅಂತ್ಯಕ್ರಿಯೆಯನ್ನು ಮುಗಿಸಿದರು. ಯಾಕೆ?

ನಮ್ಮ ಭವ್ಯಭಾರತದಲ್ಲಿ ಅತ್ಯಾಚಾರದ ನೂರು ಪ್ರಕರಣಗಳಲ್ಲಿ ಕೇವಲ 27 ಪ್ರಕರಣಗಳಲ್ಲಿ ಮಾತ್ರ ಅಪರಾಧಿಗಳಿಗೆ ಶಿಕ್ಷೆಯಾಗುತ್ತದೆ. 2018ರಲ್ಲಿ ಪೊಲೀಸ್ ಇಲಾಖೆಯಲ್ಲಿ ದಾಖಲಾಗಿದ್ದು 1,56,327 ರೇಪ್ ಪ್ರಕರಣಗಳು.

ಅವುಗಳಲ್ಲಿ ವಿಚಾರಣೆ ಪೂರ್ಣಗೊಂಡ ಪ್ರಕರಣಗಳು 17,313 ಮಾತ್ರ. ಇವುಗಳಲ್ಲಿ 11,133 ಪ್ರಕರಣಗಳ ಆರೋಪ ಪಟ್ಟಿ ಸಲ್ಲಿಕೆಯಾಗುವ ಮೊದಲೇ ಆರೋಪಿಗಳು ಬಿಡುಗಡೆಯಾಗಿದ್ದರು, 1472 ಪ್ರಕರಣಗಳಲ್ಲಿ ಆರೋಪಿಗಳು ವಿಚಾರಣೆ ನಡೆದು ದೋಷಮುಕ್ತರಾಗಿದ್ದರು.

ಆರೋಪಿಗಳು ದೋಷಮುಕ್ತರಾಗಲು ಒಂದು ಕಾರಣ ಏನೆನ್ನುವುದು ಬುಧವಾರ ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪನ್ನು ನೋಡಿದವರಿಗೆ ಮನವರಿಕೆಯಾಗಿರಬಹುದು. ಇನ್ನೊಂದು ಪ್ರಮುಖ ಕಾರಣ ನ್ಯಾಯಾಲಯಕ್ಕೆ ಪೊಲೀಸರು ಸಲ್ಲಿಸುವ ಆರೋಪಪಟ್ಟಿಯಲ್ಲಿನ ದೋಷಗಳು.

ಅತ್ಯಾಚಾರದಂತಹ ಪ್ರಕರಣಗಳಲ್ಲಿ ಶೇಕಡಾ 90ರಷ್ಟು ಪ್ರಕರಣಗಳು ಪೊಲೀಸ್ ಇಲಾಖೆಯಲ್ಲಿ ಎಫ್ ಐ ಆರ್ ದಾಖಲಾಗಿ ಆರೋಪ ಪಟ್ಟಿ ಸಿದ್ದಗೊಂಡು ನ್ಯಾಯಾಲಯಕ್ಕೆ ಸಲ್ಲಿಸುವ ಹಂತದಲ್ಲಿ ಸತ್ತು ಹೋಗಿರುತ್ತವೆ.

ಸರ್ಕಾರ ವಿಶೇಷ ಆಸಕ್ತಿ ವಹಿಸಿದರೆ, ಪಬ್ಲಿಕ್ ಪ್ರಾಸಿಕ್ಯೂಟರ್ ಗಳೇನಾದರೂ ಕಸಬುದಾರ ವಕೀಲರಂತೆ ವೃತ್ತಿನಿಷ್ಠೆಯಿಂದ ಕಾರ್ಯನಿರ್ವಹಿಸಿದರೆ ಸತ್ತುಹೋಗಿರುವ ಒಂದಷ್ಟು ಪ್ರಕರಣಗಳಿಗೆ ಜೀವ ತುಂಬಬಹುದು. ಅವರೂ ವ್ಯವಸ್ಥೆಯ ಜೊತೆ ಷಾಮೀಲಾಗಿದ್ದರೆ ಆತನೂ ಸೇರ್ಕೊಂಡು ಉಳಿದ ಪ್ರಕರಣಗಳನ್ನು ಮುಗಿಸಿಬಿಡುತ್ತಾರೆ.

ಅಪರಾಧಿಗಳನ್ನು ರಕ್ಷಿಸಲು ಪೊಲೀಸರು ನಿರ್ಧರಿಸಿದರೆ ಅವರು ಮೊದಲು ಸಾಕ್ಷ್ಯ ನಾಶಕ್ಕೆ ಇಳಿಯುತ್ತಾರೆ. ಹತ್ರಾಸ್ ನಲ್ಲಿ ಅತ್ಯಾಚಾರಕ್ಕೊಳಗಾಗಿ ಸಾವಿಗೀಡಾದ ದಲಿತ ಯುವತಿಯ ಪ್ರಕರಣವನ್ನು ಸೂಕ್ಷ್ಮವಾಗಿ ಗಮನಿಸಿದರೆ ಇದು ಸ್ಪಷ್ಟವಾಗುತ್ತದೆ.
ಸೆಪ್ಟೆಂಬರ್ ಹದಿನಾಲ್ಕರಂದು ತನ್ನ ಮನೆ ಸಮೀಪದ ಕಾಡಲ್ಲಿ ಈ ದಲಿತ ಯುವತಿಯ ಮೇಲೆ ಊರಿನ ಮೇಲ್ಜಾತಿಯ ನಾಲ್ವರು ದುಷ್ಕರ್ಮಿಗಳು ಅತ್ಯಾಚಾರ ಎಸಗುತ್ತಾರೆ.

ಅಲ್ಲಿಂದಲೇ ಸಾಕ್ಷ್ಯ ನಾಶದ ಕೆಲಸ ಪ್ರಾರಂಭವಾಗುತ್ತದೆ. ಆ ಯುವತಿ ಒಂದೆರಡು ವರ್ಷ ಮಾತ್ರ ಶಾಲೆಗೆ ಹೋಗಿದ್ದಳಂತೆ. ಓದಲು ಬರೆಯಲು ಗೊತ್ತಿದ್ದ ಹಾಗೆ ಕಾಣುತ್ತಿಲ್ಲ. ಇದರಿಂದಾಗಿ ಮೌಖಿಕ ಹೇಳಿಕೆಯನ್ನಷ್ಟೇ ನೀಡಲು ಸಾಧ್ಯವಿತ್ತು. ಅದಕ್ಕಾಗಿ ನಾಲಗೆಯನ್ನು ಕತ್ತರಿಸಲಾಗಿತ್ತು.

ಅಲ್ಲಿಂದ ಪೊಲೀಸರ ಪ್ರವೇಶವಾಗುತ್ತದೆ. ಅಷ್ಟರಲ್ಲಿ ಯುವತಿ ಅಪರಾಧಿಗಳ ಹೆಸರನ್ನು ಹೇಳಿರುತ್ತಾಳೆ, ನಾಲ್ವರ ಬಂಧನವೂ ಆಗಿರುತ್ತದೆ. ಮಾಧ್ಯಮಗಳಲ್ಲಿ ವರದಿ ಬರತೊಡಗುತ್ತದೆ. ಇದೇನು ಕೈಮೀರಿ ಹೋಗುತ್ತಿದೆ ಎಂದನಿಸಿದಾಗ ಹೆತ್ತವರಿಗೆ ಮನವರಿಕೆ ಮಾಡಿ ಸ್ಥಳೀಯ ಆಸ್ಪತ್ರೆಯಲ್ಲಿದ್ದ ಆಕೆಯನ್ನು ದಿಡೀರನೆ ದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆಗೆ ಸಾಗಿಸುತ್ತಾರೆ. ಹೋಗುವ ಮೊದಲು ಆಕೆ ತಾಯಿಯ ಜೊತೆ, ಹುಷಾರಾಗಿ ಬರ್ತೇನೆ ಎಂದು ಹೇಳಿ ಹೋಗಿದ್ದಳಂತೆ.

ಹದಿನಾಲ್ಕು ದಿನ ಆಸ್ಪತ್ರೆಯಲ್ಲಿದ್ದು ಚೇತರಿಸಿಕೊಳ್ಳುತ್ತಿದ್ದ ಯುವತಿ ದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆ ಸೇರಿದ ಹದಿನೈದು ಗಂಟೆಗಳಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆಯುತ್ತಾಳೆ. ತಕ್ಷಣ ಹತ್ರಾಸ್ ಜಿಲ್ಲೆಯ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಸ್ಪತ್ರೆಗೆ ಧಾವಿಸುತ್ತಾರೆ. ಹೆತ್ತವರಿಗೆ ಸಾವಿನ ಸುದ್ದಿ ತಿಳಿಸಿ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಅದರ ನಂತರ ಹೆತ್ತವರನ್ನು ದೂರ ಇಟ್ಟು ಯುವತಿಯ ಅಂತ್ಯಕ್ರಿಯೆ ನಡೆಸಲಾಗುತ್ತದೆ.

ಗಮನಿಸಬೇಕಾದ ಸಂಗತಿ ಎಂದರೆ ಇಲ್ಲಿಯ ವರೆಗೆ ಪೊಲೀಸರು ಹೆತ್ತವರಿಗೆ ಯುವತಿಯ ಮೃತದೇಹದ ಮರಣೋತ್ತರ ಪರೀಕ್ಷೆಯ ವರದಿಯನ್ನು ನೀಡಿಲ್ಲ. ಇಷ್ಟೆಲ್ಲ ತಂತ್ರ-ಕುತಂತ್ರಗಳನ್ನು ನಡೆಸಿದವರು ತ ಮರಣೋತ್ತರ ಪರೀಕ್ಷೆಯಲ್ಲಿಯೂ ಕೈಯಾಡಿಸಿರುವ ಸಾಧ್ಯತೆಗಳು ಖಂಡಿತ ಇದೆ. ಸಂಶಯಗೊಂಡು ಹೆತ್ತವರು ಮರು ಮರಣೋತ್ತರ ಪರೀಕ್ಷೆಗೆ ಒತ್ತಾಯಿಸಬಾರದೆಂದೇ ಅವಸರದಲ್ಲಿ ಅಂತ್ಯಕ್ರಿಯೆ ನಡೆಸಿ ಅಳಿದುಳಿದ ಸಾಕ್ಷ್ಯಗಳನ್ನು ನಾಶ ಮಾಡಲಾಗಿದೆ.

ಸಾಮಾನ್ಯವಾಗಿ ಮೆಡಿಕೋ-ಲೀಗಲ್ ಪ್ರಕರಣಗಳಲ್ಲಿ ಮೃತದೇಹದ ಅಂತ್ಯಕ್ರಿಯೆಯನ್ನು ಹೇಗೆ ಮಾಡಬೇಕೆಂಬುದನ್ನು ಹೆತ್ತವರು/ಪೋಷಕರು ನಿರ್ಧರಿಸಬೇಕು. ಈ ಪ್ರಕರಣದಲ್ಲಿ ಮರಣೋತ್ತರ ಪರೀಕ್ಷೆಗೆ ಮೊದಲು ಪೊಲೀಸರು ಒಂದಷ್ಟು ಕಾಗದಪತ್ರಗಳಿಗೆ ಯುವತಿಯ ತಂದೆಯ ಸಹಿಹಾಕಿಸಿದ್ದಾರೆ.

ಅನಕ್ಷರಸ್ಥ ತಂದೆ ಹೇಳಿಕೆಯನ್ನು ಖಂಡಿತ ಓದಿರುವುದಿಲ್ಲ, ಪೊಲೀಸರು ಓದಿ ಹೇಳಿದ್ದನ್ನು ಒಪ್ಪಿಕೊಂಡಿರಬಹುದು. ಅದರಲ್ಲಿ ಮಗಳ ಮೃತದೇಹವನ್ನು ಸುಡಲು ಒಪ್ಪಿಗೆ ನೀಡಿದ್ದ ಪತ್ರಕ್ಕೂ ಅವರು ಸಹಿಹಾಕಿರಬಹುದು. ಅದನ್ನೇ ಪೊಲೀಸರು ಈಗ ‘’ ತಂದೆಯ ಒಪ್ಪಿಗೆಯ ಮೇಲೆಯೇ ಮೃತದೇಹದ ಅಂತ್ಯಕ್ರಿಯೆ ನಡೆಸಲಾಗಿದೆ’ ಎಂದು ಹೇಳುತ್ತಿರುವುದು.

ಈಗಾಗಲೇ ಪೊಲೀಸರ ಹೇಳಿಕೆಗಳ ಧಾಟಿ ಬದಲಾಗಿದೆ. ಮೊದಲನೆಯದಾಗಿ ಯುವತಿಯ ಮೇಲೆ ರೇಪ್ ನಡೆದಿಲ್ಲ, ರೇಪ್ ಗೆ ಪ್ರಯತ್ನಿಸಲಾಗಿದೆ ಎಂದು ಹೇಳತೊಡಗಿದ್ದಾರೆ, ಇದರ ಜೊತೆಗೆ ಯುವತಿಯ ನಾಲಗೆ ಕತ್ತರಿಸಲಾಗಿಲ್ಲ ಎಂದೂ ಹೇಳತೊಡಗಿದ್ದಾರೆ. ಪೊಲೀಸರು ನಾಳೆ ಅಧಿಕೃತವಾಗಿ ಈ ಹೇಳಿಕೆ ನೀಡಿದರೆ ಇದು ಸುಳ್ಳೆಂದು ಸಾಬೀತುಪಡಿಸುವುದು ಹೇಗೆ? ಮೃತದೇಹ ಸುಟ್ಟು ಬೂದಿಯಾಗಿದೆ.

ಇದನ್ನೇ “ ಪೊಲೀಸರಿಂದ ಕಾನೂನಿನ ಅತ್ಯಾಚಾರ” ಎಂದು ಹೇಳಲಾಗುತ್ತಿದೆ.ಯುಪಿ ಪೊಲೀಸರು ಈ ಕಲೆಯಲ್ಲಿ ವರ್ಷದಿಂದ ಪಳಗಿ ಬಿಟ್ಟಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಸತಿ ಯೋಜನೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.

ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

Published

on

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.

2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.

3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.

4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.

5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.

6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.

7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.

8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.

9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.

10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.

ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರ ಪುರಷ್ಕೃತ ಕೃಷಿಯೋನ್ನತಿ ಯೋಜನೆಯಡಿ ‘’ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು’’ (National Mission on Edible Oil – Oilseeds (NMEO-OS) ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದೆ.

ಎಣ್ಣೆಕಾಳು ಬೆಳೆಗಾರರು ಮತ್ತು ಮೌಲ್ಯ ಸರಪಳಿ ಪಾಲುದಾರರನ್ನು (Value Chain Partners) ಸಂಸ್ಕರಣಾದಾರರೊಂದಿಗೆ ಸಂಪರ್ಕಿಸಲು ಮತ್ತು ಅವರಿಗೆ ಮಾರುಕಟ್ಟೆ ಕಲ್ಪಿಸುವುದರೊಂದಿಗೆ ಉತ್ತಮ ಲಾಭವನ್ನು ಪಡೆಯುವಂತೆ ಖಾತ್ರಿಪಡಿಸುವುದು ಯೋಜನೆಯ ಗುರಿಗಳಲ್ಲಿ ಒಂದಾಗಿದೆ.

ಸದರಿ ಯೋಜನೆಯಡಿ ಸ್ಥಳೀಯವಾಗಿ ಉದ್ಯೋಗಾವಕಾಶ ಕಲ್ಪಿಸಲು ಹಾಗೂ ಶುದ್ಧ ಖಾದ್ಯ ತೈಲ ಉಪಯೋಗಿಸಲು ಅನುಕೂಲವಾಗುವಂತೆ ಪ್ರೇರೇಪಿಸಲು ಸೂಕ್ತವಾಗುವಂತೆ ಹಾಗೂ ಮೌಲ್ಯ ಸರಪಳಿಯನ್ನು ಉತ್ತೇಜಿಸಲು, ಸಂಸ್ಕರಣಾ ಘಟಕಗಳಿಗೆ ಅವಶ್ಯವಿರುವ ಯಂತ್ರೋಪಕರಣಗಳನ್ನು ಪಡೆಯಲು/ಪ್ರಾಥಮಿಕ ಮತ್ತು ದ್ವಿತೀಯ ಎಣ್ಣೆಕಾಳು ಕೊಯ್ಲೋತ್ತರ ಮೂಲ ಸೌಕರ್ಯ ಸೌಲಭ್ಯ ಪಡೆಯಲು ಗರಿಷ್ಠ ಯೋಜನಾ ವರದಿಯ ಶೇ.33 ರಷ್ಟು ಅಥವಾ ರೂ.9.99 ಲಕ್ಷಕ್ಕೆ ಮೀರದಂತೆ ಅನುದಾನವನ್ನು ನೀಡಲಾಗುವುದು. ಸದರಿ ಯೋಜನೆಯ ಘಟಕದಡಿ ಕಟ್ಟಡ ವೆಚ್ಚ ಮತ್ತು ಭೂಮಿ ಬಾಡಿಗೆಯನ್ನು ಪರಿಗಣಿಸಲಾಗುವುದಿಲ್ಲ.

ಸದರಿ ಯೋಜನೆಯಡಿ ಸೌಲಭ್ಯ ಪಡೆಯಲು ಸರ್ಕಾರ / ಸರ್ಕಾರೇತರ ಸಂಸ್ಥೆಗಳು, FPOs ಗಳು ಜುಲೈ 04 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಯೋಜನೆಯ ಮಾರ್ಗಸೂಚಿಯನ್ವಯ ಜಿಲ್ಲಾ ಕಾರ್ಯಕಾರಿ ಸಮಿತಿಯಲ್ಲಿ ಫಲಾನುಭವಿ ಆಯ್ಕೆ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಉಪ ಕೃಷಿ ನಿರ್ದೇಶಕರ ಕಛೇರಿ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗಳನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending