ಬಹಿರಂಗ
ನಮ್ಮ ನಡುವಿನ ಮನು ನಮ್ಮೊಳಗಿನ ಸ್ಮೃತಿ
ಈ ಲೇಖನ ಬೇರೊಂದು ಸಂದರ್ಭದಲ್ಲಿ ಬರೆದದ್ದು, ಎರಡು ತಿಂಗಳ ಹಿಂದೆ, ಇವತ್ತಿನ ಸಂದರ್ಭಕ್ಕೂ ಅನ್ವಯಿಸುತ್ತದೆ. ಹಾಗಾಗಿ ಮತ್ತೊಮ್ಮೆ ಓದುಗರ ಮುಂದೆ.
- ನಾ ದಿವಾಕರ
ಭಾರತ ಮತ್ತೊಮ್ಮೆ ವಿಕೃತಿಯೆಡೆಗೆ ಹೊರಳುತ್ತಿರುವಂತಿದೆ. ಮನುಕುಲದ ಅಸ್ತಿತ್ವವನ್ನೇ ಇಲ್ಲವಾಗಿಸುವ ಯುದ್ಧಗಳನ್ನು ಪ್ರೀತಿಯಿಂದ ಅಪ್ಪಿಕೊಳ್ಳುವ ಮನಸುಗಳು ಹೆಚ್ಚಾಗುತ್ತಿವೆ. ಮತ್ತೊಂದೆಡೆ ಮಾನವ ಸಮಾಜದಲ್ಲಿ ಸಹಜೀವನವನ್ನು ಗಟ್ಟಿಗೊಳಿಸುವ ಪ್ರೀತಿ ಪ್ರೇಮ ಬಾಂಧವ್ಯಗಳನ್ನು ಯುದ್ಧ ಎಂದು ಬಣ್ಣಿಸಲಾಗುತ್ತಿದೆ.
ಪ್ರೀತಿ ಎನ್ನುವುದು ಒಂದು ರೀತಿಯಲ್ಲಿ ಯುದ್ಧವೇ ಸರಿ ಆದರೆ ಜೀವಕಂಟಕ ಯುದ್ಧವಲ್ಲ, ಎರಡು ಜೀವಗಳನ್ನು ಬೆಸೆಯುವ ಯುದ್ಧ. ಎರಡು ಹೃದಯ ಸಾಮ್ರಾಜ್ಯಗಳ ನಡುವೆ ನಡೆಯುವ ಯುದ್ಧದಲ್ಲಿ ಅಂತಿಮವಾಗಿ ಗೆಲ್ಲುವುದು ಮಾನವನ ಆಂತರ್ಯದಲ್ಲಿರುವ ಸಂವೇದನೆ, ಸಹನೆ ಮತ್ತು ಮಾನವೀಯತೆ. ಈ ಮೂರು ಮೌಲ್ಯಗಳು ಇಲ್ಲದಾದಾಗ ಇದು ಜಿಹಾದ್ನಂತೆ (ಧರ್ಮಯುದ್ಧ) ಕಾಣುತ್ತದೆ. ಭಾರತದಲ್ಲಿ ಆಗುತ್ತಿರುವುದೂ ಇದೇ.
20ನೆಯ ಶತಮಾನ ಇಡೀ ಮನುಕುಲಕ್ಕೆ ಸಂವೇದನೆಯನ್ನು ಕಲಿಸಬೇಕಿತ್ತು. ಏಕೆಂದರೆ ಇದು ಆಧುನಿಕ ಜಗತ್ತಿನ ಕನ್ನಡಿಯಂತೆ. ಒಂದು ಶತಮಾನದ ಅವಧಿಯಲ್ಲಿ ಮಾನವ ಸಮಾಜ ಕಂಡ ಸಾವು, ನೋವು, ಹಿಂಸೆ, ಕ್ರೌರ್ಯ, ದೌರ್ಜನ್ಯ ಮತ್ತು ವಿನಾಶಕಾರಿ ಬೆಳವಣಿಗೆಗಳು ನಮ್ಮಲ್ಲಿ, ಅಂದರೆ ಮಾನವ ಸಮಾಜದಲ್ಲಿ, ಮಾನವ ಪ್ರೀತಿಯನ್ನು, ಸೂಕ್ಷ್ಮ ಸಂವೇದನೆಯನ್ನು ಹೆಚ್ಚಿಸಬೇಕಿತ್ತು. ಭೀಕರ ಯುದ್ಧದ ನಡುವೆಯೂ ಪ್ರೀತಿಯನ್ನು ಹುಡುಕುವ ಹೃದಯಗಳು ಆಗಲೂ ಇದ್ದವು. ವಿಯಟ್ನಾಂ ಯುದ್ಧದ ಸಂದರ್ಭದಲ್ಲಿ, ಹಿಟ್ಲರನ ಕ್ರೌರ್ಯದ ನಡುವೆ, ತೈಲ ಮಾರುಕಟ್ಟೆಗಾಗಿ ನಡೆದ ವಿಧ್ವಂಸಕ ಸಮರಗಳಲ್ಲಿ, ಸಾಮ್ರಾಜ್ಯಶಾಹಿ ಬೆಳೆಸಿದ ಭಯೋತ್ಪಾದನೆಯಲ್ಲಿ, ಮತಧರ್ಮಗಳು ಬೆಳೆಸಿದ ಮತಾಂಧತೆಯಲ್ಲಿ ಪ್ರೀತಿಯನ್ನು ಹೆಕ್ಕಿ ತೆಗೆಯುವ ಪ್ರಯತ್ನಗಳೂ ನಡೆದೇ ಇದ್ದವು.
ಆದರೆ ಕೊನೆಯಲ್ಲಿ ಗೆದ್ದಿದ್ದು ಹಿಂಸೆಯೇ, ವಿಕ್ರಮ ಸಾಧಿಸಿದ್ದು ಯುದ್ಧಪರಂಪರೆಯೇ. ಪ್ರೀತಿಸಲು ಕಾರಣ ಬೇಕಿಲ್ಲ ಎರಡು ಹೃದಯಗಳು ಸ್ಪಂದಿಸಿದರೆ ಪ್ರೀತಿ ಹುಟ್ಟುತ್ತದೆ, ಎರಡೂ ಹೃದಯಗಳನ್ನು ಸಾಯಲು ಬಿಡದೆ ಕಾಪಾಡುತ್ತದೆ. ಆದರೆ ಯುದ್ಧ ಮಾಡಲು ಕಾರಣ ಬೇಕು. ನಿಮಿತ್ತ ಬೇಕು. ಅದು ಭೌಗೋಳಿಕ ಹಸಿವು, ಸಂಪತ್ತಿನ ಮೋಹ, ಅಧಿಪತ್ಯದ ಹಪಹಪಿ, ಶ್ರೇಷ್ಠತೆಯ ಪಾರಮ್ಯ, ದಿಗ್ವಿಜಯದ ಅಹಮಿಕೆ ಹೀಗೆ ಹಲವು ಕಾರಣಗಳು ಇಲ್ಲದೆ ಯುದ್ಧ ಸಂಭವಿಸುವುದಿಲ್ಲ.
ಈ ಕಾರಣಗಳನ್ನು ನಾವು ಇಸ್ಲಾಂ ಹೆಸರಿನಲ್ಲಿ ಸಾವಿರಾರು ಕೊಲೆ ಮಾಡಿರುವ ಭಯೋತ್ಪಾದಕರಲ್ಲಿ, ಹಿಂದುತ್ವದ ಹೆಸರಿನಲ್ಲಿ ಸಾವಿರಾರು ಶವಯಾತ್ರೆಗಳನ್ನು ಸಂಭ್ರಮಿಸಿರುವ ಮತಾಂಧರಲ್ಲಿ, ಜಾತಿ ಶ್ರೇಷ್ಠತೆಗಾಗಿ ನೂರಾರು ಜೀವಗಳನ್ನು ದಹಿಸಿ ವಿಕೃತಿ ಮೆರೆದಿರುವ ಮೇಲ್ಜಾತಿಗಳಲ್ಲಿ ಮತ್ತು ವರ್ಣಬೇಧ ನೀತಿಯನ್ನು ಸಂರಕ್ಷಿಸಲು ಪಣತೊಟ್ಟಿರುವ ಮನಸುಗಳಲ್ಲಿ ಕಾಣಲು ಸಾಧ್ಯ. 21ನೆಯ ಶತಮಾನದ ಆಧುನಿಕ ಭಾರತ, ಸಾವಿರಾರು ವರ್ಷಗಳ ಸಾಂಸ್ಕøತಿಕ ಪರಂಪರೆಯನ್ನು ಹೊಂದಿರುವ ಭಾರತ ಈ ವಿಕೃತಿಯಿಂದ ಹೊರಬರಬೇಕಿತ್ತು. ಏಕೆಂದರೆ ಜಗತ್ತಿನ ಯಾವುದೇ ಒಂದು ದೇಶದಲ್ಲಿ ಕಾಣಲಾಗದಷ್ಟು ಸಮಾಜ ಸುಧಾರಣೆಯ ಪ್ರಯತ್ನಗಳು ಇಲ್ಲಿ ನಡೆದಿವೆ. ಚಾರ್ವಾಕನಿಂದ ಅಂಬೇಡ್ಕರ್ ವರೆಗೆ ಇದನ್ನು ಕಂಡಿದ್ದೇವೆ.
ಆದರೆ ಈ ಮನಸ್ಥಿತಿ ಬದಲಾಗದಿರುವಂತೆ ಈ ದೇಶದ ಸ್ಥಾಪಿತ ಜಾತಿ ವ್ಯವಸ್ಥೆ ಮತ್ತು ಮತಧಾರ್ಮಿಕ ನೆಲೆಗಳು ಇತಿಹಾಸದ ಪ್ರತಿಯೊಂದು ಕಾಲಘಟ್ಟದಲ್ಲೂ ಎಚ್ಚರವಹಿಸಿವೆ. ಸಮಾಜ ಸುಧಾರಕರನ್ನು ತನ್ನೊಳಗೆ ಸಮೀಕರಿಸಿಕೊಳ್ಳುವ ಮೂಲಕ ಅಥವಾ ಸಂಪೂರ್ಣವಾಗಿ ನಿರಾಕರಿಸುವ ಮೂಲಕ ಅಥವಾ ಪರಂಪರೆ ಮತ್ತು ಸಾಂಸ್ಕೃತಿಕ ಇತಿಹಾಸದ ನೆಲೆಯಲ್ಲಿ ಯಥಾಸ್ಥಿತಿಯನ್ನು ಸಂರಕ್ಷಿಸುವ ಮೂಲಕ ವಿಕೃತ ಮನಸ್ಥಿತಿಯನ್ನು ಉಳಿಸಿಕೊಳ್ಳಲಾಗಿದೆ.
ಈ ಮನಸ್ಥಿತಿಯನ್ನೇ ಮನುಸ್ಮೃತಿ ಎನ್ನುವ ಪ್ರಾಚೀನ ಸಂಹಿತೆಗಳ ಗ್ರಂಥ ಪ್ರತಿಪಾದಿಸುತ್ತದೆ. ಪ್ರೀತಿಸಬೇಕಾದ ಎರಡು ಹೃದಯಗಳು ಮತಧಾರ್ಮಿಕ ಕಾರಣದಿಂದಲೋ, ಜಾತಿ ಬೇಧದ ಕಾರಣದಿಂದಲೋ ಅಥವಾ ಶ್ರೇಷ್ಠ-ಕನಿಷ್ಠದ ಅಸ್ಮಿತೆಗಳ ಕಾರಣದಿಂದಲೋ, ಪರಿಶುದ್ಧತೆ ಮತ್ತು ಮಾಲಿನ್ಯದ ಕಾರಣದಿಂದಲೋ ಏಕೆ ದೂರವೇ ಇರಬೇಕು, ಹೇಗೆ ದೂರ ಇರಬೇಕು ಮತ್ತು ಒಂದು ವೇಳೆ ಹತ್ತಿರ ಬಂದರೆ ಏನೇನು ಅನಾಹುತಗಳು ಸಂಭವಿಸುತ್ತವೆ ಎಂದು ವ್ಯಾಖ್ಯಾನಿಸುವ ಒಂದು ಕೃತಿ ಮನುಸ್ಮೃತಿ. ಇದಕ್ಕಿಂತಲೂ ಹೆಚ್ಚಿನದಾಗಿ ಏನೂ ಹೇಳದ ಒಂದು ಗ್ರಂಥ. ಆದರೆ ಇದನ್ನು ಹೇಳಲು ಧರ್ಮಶಾಸ್ತ್ರಗಳನ್ನು ಉಲ್ಲೇಖಿಸುವ ಮೂಲಕ ಮೇಲ್ಜಾತಿಗಳಲ್ಲಿ ಸಾರ್ವಕಾಲಿಕ ಮಾನ್ಯತೆ ಪಡೆದಿರುವ ಒಂದು ಗ್ರಂಥ.
ಮನುಸ್ಮೃತಿಯ ಅನುಸರಣೆಗೆ ದೊರೆಯುವ ಮಾನ್ಯತೆ, ಈ ಗ್ರಂಥವನ್ನು ಧಿಕ್ಕರಿಸುವ ಧೋರಣೆಗೆ ದೊರೆಯುವುದಿಲ್ಲ ಎನ್ನುವುದೇ ಭಾರತೀಯ ಸಮಾಜದ ದೌರ್ಬಲ್ಯ . ಏಕೆ ಹೀಗೆ ? ಏಕೆಂದರೆ ನಾವು ಮನುಸ್ಮೃತಿ ಎನ್ನುವ ಗ್ರಂಥವನ್ನು ಮಾತ್ರ ಸುಟ್ಟಿದ್ದೇವೆ, ಈ ಗ್ರಂಥ ನಮ್ಮ ಸಾಮಾಜಿಕ ವಲಯದಲ್ಲಿ, ಸಾಂಸ್ಥಿಕವಾಗಿ, ವ್ಯಕ್ತಿಗತವಾಗಿ, ಸಂಘಟನಾತ್ಮಕವಾಗಿ ಮತ್ತು ರಾಜಕೀಯವಾಗಿ ಗಟ್ಟಿಯಾದ ನೆಲೆ ಕಂಡುಕೊಂಡಿದೆ.
ಗ್ರಂಥದ ಅಧ್ಯಯನದ ಅವಶ್ಯಕತೆಯೇ ಇಲ್ಲದೆ,ಮನು ಎಂಬ ಒಬ್ಬ ಸನಾತನಿ ಭಾರತದಲ್ಲಿ ಬ್ರಾಹ್ಮಣ್ಯದ ನೆಲೆಯನ್ನು ಗಟ್ಟಿಗೊಳಿಸಲು ರೂಪಿಸಿದ ಸಂಹಿತೆಗಳನ್ನು ಚಾಚೂತಪ್ಪದಂತೆ ಪಾಲಿಸಿಕೊಂಡು ಬರುವ ಒಂದು ಬೃಹತ್ ಜನಸಮುದಾಯ ನಮ್ಮ ನಡುವೆ ಇದೆ. ಒಂದು ಸಮಾಜೋ ಸಾಂಸ್ಕೃತಿಕ ಪರಂಪರೆ ವ್ಯವಸ್ಥೆಯಾಗಿ ರೂಪುಗೊಂಡು, ಇಡೀ ಭೌಗೋಳಿಕ ಪ್ರದೇಶದ ಜನತೆಯ ಮೇಲೆ ಹೇಗೆ ಪ್ರಭಾವ ಬೀರುತ್ತದೆ ಎನ್ನಲು ಇದೊಂದು ನಿದರ್ಶನ.
ಹಾಗಾಗಿಯೇ ಟಿ ವಿ ವಾಹಿನಿಯಲ್ಲಿ ಬರುವ ಒಂದು ಕಾರ್ಯಕ್ರಮದಲ್ಲಿ ಮನುಸ್ಮೃತಿಯ ದಹನದ ಪ್ರಶ್ನೆ ಕೇಳಿಬಂದರೆ ಈ ಸಮಾಜೋ ಸಾಂಸ್ಕೃತಿಕ ವ್ಯವಸ್ಥೆ ಸಿಡಿದೇಳುತ್ತದೆ. ಕೌನ್ ಬನೇಗ ಕರೋಡ್ಪತಿ ಕಾರ್ಯಕ್ರಮದಲ್ಲಿ ಈ ಪ್ರಶ್ನೆ ಪ್ರಶ್ನೋತ್ತರದ ಒಂದು ಭಾಗವಾಗಿ ಮೂಡಿಬಂದಿದೆ. ಕಾರ್ಯಕ್ರಮದ ನಿರೂಪಕ ಅಮಿತಾಬ್ ಬಚ್ಚನ್ ಅಂಬೇಡ್ಕರ್ ವಾದಿಯೇನಲ್ಲ. ವ್ಯಕ್ತಿಗತ ನೆಲೆಯಲ್ಲಿ ಮನುಸ್ಮೃತಿಯನ್ನು ಕುರಿತು ಅವರ ನಿಲುವು ಏನು ಎನ್ನುವುದೂ ಅಸ್ಪಷ್ಟವೇ.
ಆದರೂ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಅಂದರೆ ಮನುಸ್ಮೃತಿ ಪ್ರಶ್ನಾತೀತವಾಗಿದೆ ಎಂದರ್ಥ ಅಲ್ಲವೇ ? ಭಾರತದ ಮಧ್ಯಮ ವರ್ಗಗಳಿಗೆ, ದಲಿತರನ್ನೂ ಸೇರಿದಂತೆ ಇದೊಂದು ಕ್ಷುಲ್ಲಕ ಘಟನೆಯಾಗಿ ಮರೆಯಾಗಿಬಿಡುತ್ತದೆ. ಪ್ರಸ್ತುತ ಆಡಳಿತದ ಚುಕ್ಕಾಣಿ ಹಿಡಿರುವ ಸಾಂಸ್ಕೃತಿಕ ರಾಜಕಾರಣಕ್ಕೆ ಇದು ಮತ್ತೊಂದು ರಸ್ತೆ ವಿಭಜಕವಾಗಿ ಜನರನ್ನು ಕವಲುಹಾದಿಗಳಲ್ಲಿ ನಿಲ್ಲಿಸಲು ಸಹಾಯಕವಾಗುತ್ತದೆ.
ಆದರೆ ಭಾರತದ ಸಾಮಾಜಿಕ-ಸಾಂಸ್ಕೃತಿಕ ಬದುಕಿನಲ್ಲಿ ಈ ಪ್ರಶ್ನೆ ಇನ್ನೂ ಬಹಳ ವರ್ಷಗಳ ಕಾಲ ಕೇಳಿಬರುತ್ತಲೇ ಇರುತ್ತದೆ. ಮನುಸ್ಮೃತಿ ಏಕೆ ಪ್ರಶ್ನಾತೀತವಾಗಿರಬೇಕು ? “ ಡಾ ಅಂಬೇಡ್ಕರ್ ಮನುಸ್ಮೃತಿಯನ್ನು ದಹಿಸಲು ಕಾರಣವೇನು ” ಎಂಬ ವಿಚಾರದ ಬಗ್ಗೆ ಈ ದೇಶದ ಎಷ್ಟು ಶಾಲೆಗಳಲ್ಲಿ ಪ್ರಬಂಧ ಅಥವಾ ಚರ್ಚಾಸ್ಪರ್ಧೆ ಆಯೋಜಿಸಲು ಸಾಧ್ಯ ? ಈ ಪ್ರಶ್ನೆಯೇ ಎಷ್ಟು ಚರ್ಚಾಸ್ಪದವಾಗಬಹುದು.
ಯೋಚಿಸೋಣ. ಡಾ ಬಿ ಆರ್ ಅಂಬೇಡ್ಕರ್ ಮನುಸ್ಮೃತಿಯನ್ನು ದಹಿಸುವ ಮೂಲಕ, ಆ ಗ್ರಂಥ ಭಾರತೀಯ ಸಮಾಜಕ್ಕೆ ಎಷ್ಟು ಅಪಾಯಕಾರಿ ಎನ್ನುವುದನ್ನು ಶೋಷಿತ ಸಮುದಾಯಗಳಿಗೆ ಮನದಟ್ಟು ಮಾಡಿದ್ದರು. ಹಾಗೆಯೇ “ ನಾವು ಇಂದು ಕೇವಲ ಗ್ರಂಥವನ್ನು ಸುಡುತ್ತಿದ್ದೇವೆ ಮುಂದೊಂದು ದಿನ ಈ ಗ್ರಂಥದಲ್ಲಿನ ಜಾತಿ ಶ್ರೇಷ್ಠತೆಯ ವಿಕೃತ ಚಿಂತನೆಗಳನ್ನೂ ಹೀಗೆಯೇ ದಹಿಸುತ್ತೇವೆ ” ಎಂದು ಈ ದೇಶದ ಜಾತಿ ವ್ಯವಸ್ಥೆಯ ವಾರಸುದಾರರಿಗೂ ಎಚ್ಚರಿಕೆಯ ಸಂದೇಶ ನೀಡಿದ್ದರು.
ಅವರ ಮೊದಲನೆಯ ಸಂದೇಶವನ್ನು ಈಗಲೂ ಭಾರತದ ಜಾತಿಪೀಡಿತ ಮನಸುಗಳು, ಶ್ರೇಷ್ಠತೆಯ ಪ್ರತಿಪಾದಕ ಸಮುದಾಯಗಳು ಪಠಿಸುತ್ತಿವೆ. ಆದರೆ ಎರಡನೆಯ ಸಂದೇಶ ಬಹುಶಃ ನೇಪಥ್ಯಕ್ಕೆ ಸರಿದಿದೆ. ಏಕೆಂದರೆ ಮನುಸ್ಮೃತಿ ಮತಧರ್ಮದ ಹೆಸರಿನಲ್ಲಿ ಆಚರಣಾತ್ಮಕವಾಗಿ ನಮ್ಮ ಬದುಕಿನಲ್ಲಿ ಹಾಸುಹೊಕ್ಕಾಗಿದೆ. ನವ ಬ್ರಾಹ್ಮಣ್ಯ ಎಲ್ಲ ಜಾತಿಗಳಲ್ಲೂ ಆವರಿಸಿದೆ.
ಜಾತಿ ಶ್ರೇಣೀಕರಣ ಮತ್ತು ಶ್ರೇಷ್ಠತೆಯನ್ನು ಪ್ರತಿಪಾದಿಸುವ ಮತ್ತು ಇದನ್ನು ಸಂರಕ್ಷಿಸುವ ಮೂಲಕವೇ ಜಾತಿಗಳ ಮೂಲಕ ಜನಸಾಮಾನ್ಯರನ್ನು ವಿಭಜಿಸುತ್ತಾ ಬ್ರಾಹ್ಮಣ್ಯದ ಪ್ರಾಬಲ್ಯವನ್ನು ಉಳಿಸಿಕೊಂಡು ಹೋಗುವ ಮನುಸ್ಮೃತಿಯ ಧ್ಯೇಯ ಸಾಧಿಸಲು ಸಂಘಪರಿವಾರ ತನ್ನದೇ ಆದ ವ್ಯೂಹ ರಚಿಸಿರುವುದನ್ನು ಹಿಂದುತ್ವ ರಾಜಕಾರಣದಲ್ಲಿ ನಾವು ಕಾಣಬೇಕಲ್ಲವೇ ? ರಾಮಮಂದಿರ ಮತ್ತು ಕಾಶ್ಮೀರ ಈ ವ್ಯೂಹದ ಎರಡು ಧೃವಗಳು ಎನ್ನುವುದನ್ನು ಹಿಂದುತ್ವದೊಡನೆ ಗುರುತಿಸಿಕೊಂಡಿರುವ ಅಂಬೇಡ್ಕರ್ ಅನುಯಾಯಿಗಳಿಗೆ ಅರ್ಥವಾಗಬೇಕಲ್ಲವೇ ?
ಕಂಬಾಲಪಲ್ಲಿಯಿಂದ ಹಥ್ರಾಸ್ವರೆಗಿನ ಬೆಳವಣಿಗೆಗಳನ್ನು ಖೈರ್ಲಾಂಜಿಯ ಮೂಲಕ ಸೂಕ್ಷ್ಮವಾಗಿ ಗಮನಿಸಿದರೆ ಇದರ ಒಳಸುಳಿಗಳನ್ನು ನಾವು ಅರ್ಥಮಾಡಿಕೊಳ್ಳಬಹುದು. 20 ವರ್ಷಗಳ ಹಿಂದೆ, ಗತ ಶತಮಾನದ ಕೊನೆಯ ವರ್ಷದಲ್ಲಿ, ಕಂಬಾಲಪಲ್ಲಿಯಲ್ಲಿ ಒಂದು ದಲಿತ ಕುಟುಂಬದ ಸಜೀವ ದಹನವಾಗಿತ್ತು. ಏಳು ಜೀವಗಳು ಸುಟ್ಟುಹೋಗಿದ್ದವು.
ಇಡೀ ದೇಶದಲ್ಲಿ ಆಕ್ರೋಶ ಭುಗಿಲೆದ್ದಿತ್ತು. ದಲಿತ ಅಸ್ಮಿತೆ ಮತ್ತು ಜಾತಿ ಶ್ರೇಷ್ಠತೆಯ ನಡುವಿನ ಸಂಘರ್ಷ ತಾರಕಕ್ಕೇರಿತ್ತು. ಆರು ವರ್ಷಗಳ ನಂತರ 2006ರಲ್ಲಿ ಖೈರ್ಲಾಂಜಿಯಲ್ಲಿ ಇಬ್ಬರು ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ಸಾರ್ವಜನಿಕವಾಗಿಯೇ ಸಂಭವಿಸಿತ್ತು. ದಲಿತ ಹೆಣ್ಣುಮಕ್ಕಳ ಸಾರ್ವಜನಿಕ ಬೆತ್ತಲೆ ಮೆರವಣಿಗೆ ಮತ್ತು ಕೊಲೆ ಸದ್ದಿಲ್ಲದೆ ಅಡಗಿಹೋಯಿತು. 2020ರಲ್ಲಿ ಹಥ್ರಾಸ್ನಲ್ಲಿ ಒಂದು ಹೆಣ್ಣು ಮಗು ಮೇಲ್ಜಾತಿಯವರಿಂದ ಅತ್ಯಾಚಾರಕ್ಕೊಳಗಾಗಿ ಅಸುನೀಗಿದಳು. ಆಕೆಯ ಶವವನ್ನು ಸದ್ದಿಲ್ಲದೆ ಆಡಳಿತ ವ್ಯವಸ್ಥೆಯ ಮೇಲ್ವಿಚಾರಣೆಯಲ್ಲೇ ದಹಿಸಲಾಯಿತು.
ಕಂಬಾಲಪಲ್ಲಿಗೂ ಹಥ್ರಾಸ್ಗೂ ಇರುವ ವ್ಯತ್ಯಾಸವಾದರೂ ಏನು ? ಸುಟ್ಟವರು ಯಾರು ಎಂಬುದಷ್ಟೇ. ಎರಡೂ ಪ್ರಕರಣಗಳಲ್ಲಿ ಮತ್ತು ಖೈರ್ಲಾಂಜಿಯಲ್ಲೂ ಸಹ ದೌರ್ಜನ್ಯಕ್ಕೆ ಕಾರಣವಾಗಿದ್ದು ಮನುಸ್ಮೃತಿಯಲ್ಲಿ ಹೇಳಲಾಗುವ ಜಾತಿ ಶ್ರೇಷ್ಠತೆಯ ಪಾರಮ್ಯ ಮತ್ತು ಪ್ರಾಬಲ್ಯ . ಮನು ಅಪರಾಧಗಳನ್ನು ಶ್ರೇಣೀಕರಣಗೊಳಿಸುವಂತೆಯೇ ಅಪರಾಧಿಗಳನ್ನೂ ಶ್ರೇಣೀಕರಣಗೊಳಿಸುತ್ತಾನೆ.
ಮನುಷ್ಯನ ಹುಟ್ಟು ಅವನ ಅಪರಾಧಿ ಸ್ಥಾನವನ್ನೂ ನಿರ್ಧರಿಸುತ್ತದೆ. ಮನುಸ್ಮೃತಿಯನ್ನು ರಚಿಸಿದ ಕಾಲಘಟ್ಟದಲ್ಲಿ ಭಾರತೀಯ ಸಮಾಜ ಇನ್ನೂ ನಾಗರಿಕ ಪ್ರಜ್ಞೆಯನ್ನು ಮೈಗೂಡಿಸಿಕೊಂಡಿರಲಿಲ್ಲ ಎಂದು ಹೇಳಬಹುದಾದರೆ, ಇಂದಿನ ಪರಿಸ್ಥಿತಿಯಲ್ಲಿ ಏನು ಹೇಳಬಹುದು ? ಹಥ್ರಾಸ್ ಘಟನೆಯಲ್ಲೂ ಇದೇ ಅನಾಗರಿಕ ಪ್ರಜ್ಞೆ ಅನಾವರಣವಾಗಿರುವುದನ್ನು ಕಂಡಿದ್ದೇವೆ ಅಲ್ಲವೇ ?
ಈ ಮೂರೂ ಘಟನೆಗಳಲ್ಲಿ ಅಪರಾಧಿಗಳಿಗೆ ಶಿಕ್ಷೆಯಾಗುವುದಿಲ್ಲ ಎನ್ನುವುದು ನಿಶ್ಚಿತ. ಎರಡು ಘಟನೆಗಳನ್ನು ನಾವು ಮರೆತಿದ್ದೇವೆ. ನಡುವೆ ಊನ ಗ್ರಾಮದಲ್ಲಿ ನಡೆದ ಘಟನೆಯನ್ನು ಒಂದು ಸಿನೆಮಾದ ಚಿತ್ರೀಕರಣದಂತೆ ನೇಪಥ್ಯಕ್ಕೆ ಸರಿಸಿಬಿಟ್ಟಿದ್ದೇವೆ. ಹಥ್ರಾಸ್ ಸಹ ಮೆಲ್ಲನೆ ಬದಿಗೆ ಸರಿದುಬಿಡುತ್ತದೆ. ಇಷ್ಟರ ನಡುವೆ ಇತ್ತೀಚೆಗೆ ಸುಪ್ರೀಂಕೋರ್ಟ್ ನೀಡಿರುವ ಒಂದು ಸಂದೇಶ ಮನುಸ್ಮೃತಿಯನ್ನು ಮತ್ತೊಮ್ಮೆ ಮುನ್ನೆಲೆಗೆ ತರುವಂತಿದೆ.
ಅಸ್ಪೃಶ್ಯ ಸಮುದಾಯಗಳು, ದಲಿತರು ನಾಲ್ಕು ಗೋಡೆಗಳ ನಡುವೆ ಅನುಭವಿಸುವ ಜಾತಿ ನಿಂದನೆಯ ಅಪಮಾನಗಳು ಎಸ್ಸಿ/ಎಸ್ಟಿ (ದೌರ್ಜನ್ಯ ಪ್ರತಿಬಂಧಕ) ಕಾಯ್ದೆಯ ವ್ಯಾಪ್ತಿಗೆ ಒಳಪಡುವುದಿಲ್ಲ ಎಂದು ದೇಶದ ಸರ್ವೋಚ್ಚ ನ್ಯಾಯಾಲಯವೇ ಹೇಳಿರುವುದನ್ನು ಗಮನಿಸಿದರೆ ಈ ದೇಶ ಸಂವಿಧಾನಕ್ಕಿಂತಲೂ ಹೆಚ್ಚು ಮನುಸ್ಮೃತಿಯನ್ನೇ ಅನುಸರಿಸುತ್ತಿದೆ ಎಂಬ ಶಂಕೆ ಕಾಡುತ್ತದೆ.
ಖೈರ್ಲಾಂಜಿ, ಕಂಪಾಲಪಲ್ಲಿ ಘಟನೆಗಳು “ಖುಲೇ ಆಕಾಶ್ ಕೆ ನೀಚೆ” ಎಂದು ಹಿಂದಿಯಲ್ಲಿ ಹೇಳುವಂತೆ ಎಲ್ಲರ ಕಣ್ಣೆದುರಿನಲ್ಲೇ ನಡೆಯಿತಲ್ಲವೇ ? ಅಲ್ಲಿ ಸಂತ್ರಸ್ತರಿಗೆ ನ್ಯಾಯ ದೊರಕಿತೇ ? ಈ ದೇಶದ ಅಸ್ಪೃಶ್ಯ ಸಮುದಾಯದ ಅಮಾಯಕರು ನಾಲ್ಕು ಗೋಡೆಗಳ ನಡುವೆ ದೌರ್ಜನ್ಯ ಅಪಮಾನಗಳನ್ನು ಮೌನವಾಗಿ ಸಹಿಸುತ್ತಲೇ ಬಂದಿದ್ದಾರೆ.
ಪ್ರತಿಯೊಂದು ಸರ್ಕಾರಿ ಕಚೇರಿಯಲ್ಲೂ, ವಿದ್ಯಾಸಂಸ್ಥೆಗಳಲ್ಲೂ, ಪ್ರತ್ಯಕ್ಷವಾಗಿ ಪರೋಕ್ಷವಾಗಿ, ಬೌದ್ಧಿಕವಾಗಿ ಇದು ನಡೆಯುತ್ತಲೇ ಇರುತ್ತದೆ. ಅಪಮಾನ ಅಥವಾ ಮಾನಸಿಕ ಚಿತ್ರಹಿಂಸೆ ಎನ್ನುವುದು ವ್ಯಕ್ತಿಗತ ನೆಲೆಯಲ್ಲಿ ಒಂದು ನೊಂದ, ದಮನಿತ ಮನಸು ಅನುಭವಿಸುವ ಯಾತನೆಯೇ ಹೊರತು, ಸಾರ್ವಜನಿಕವಾಗಿ ನಿರ್ವಚಿಸಬಹುದಾದ ವಿದ್ಯಮಾನವಲ್ಲ. ನ್ಯಾಯ ವಿತರಣಾ ವ್ಯವಸ್ಥೆ ಸಾಕ್ಷಿ ಪುರಾವೆಗಳನ್ನು ಅವಲಂಬಿಸುವುದರಿಂದ ಈ ಸೂಕ್ಷ್ಮ ಅರ್ಥವಾಗದಿರಬಹುದು. ಆದರೆ ಕಾರ್ಯಾಂಗ ಮತ್ತು ಶಾಸಕಾಂಗಕ್ಕೆ ಅರ್ಥವಾಗಬೇಕಲ್ಲವೇ ?
ಕಾರ್ಯಾಂಗ ಮತ್ತು ಶಾಸಕಾಂಗದಲ್ಲಿ ಅಸ್ಪೃಶ್ಯ ಸಮುದಾಯವನ್ನು, ಶೋಷಿತರನ್ನು ಮತ್ತು ದಲಿತರನ್ನು ಪ್ರತಿನಿಧಿಸುವ ದೇಹಗಳು ಹೇರಳವಾಗಿವೆ. ಮನಸುಗಳು ಇಲ್ಲ ಎನ್ನುವುದು ಸ್ಪಷ್ಟವಾಗುತ್ತಿದೆ. ಏಕೆಂದರೆ ಅಧಿಕಾರ ಕೇಂದ್ರಗಳು ಈ ಮನಸುಗಳಲ್ಲಿ ಮನುಸ್ಮೃತಿಯ ಚಿಂತನೆಗಳನ್ನೇ ಬಿತ್ತುತ್ತವೆ. ಮನುಸ್ಮೃತಿ ಕೇವಲ ಒಂದು ಮತಧಾರ್ಮಿಕ ಸಂಹಿತೆಯಲ್ಲ.
ಅಧಿಕಾರ ರಾಜಕಾರಣದ ಒಂದು ನೀತಿ ಸಂಹಿತೆಯೂ ಹೌದು. ಇದು ಕಳೆದ 20-30 ವರ್ಷಗಳ ರಾಜಕಾರಣದಲ್ಲಿ, ವಿಶೇಷವಾಗಿ ಹಿಂದುತ್ವ ರಾಜಕಾರಣ ಮತ್ತು ಸಾಂಸ್ಕೃತಿಕ ರಾಷ್ಟ್ರೀಯತೆಯ ನೆಲೆಯಲ್ಲಿ ಸ್ಪಷ್ಟವಾಗಿದೆ. ಸುಪ್ರೀಂಕೋರ್ಟ್ನ ತೀರ್ಪು, ಹಥ್ರಾಸ್ ಘಟನೆಯ ಬಗ್ಗೆ ಶೋಷಿತ ಸಮುದಾಯಗಳ ಮೌನ ಮತ್ತು ಈ ಸಮುದಾಯವನ್ನು ಪ್ರತಿನಿಧಿಸುವವರ ಜಾಣ ಕುರುಡು ಇದನ್ನು ಮತ್ತಷ್ಟು ದೃಢಪಡಿಸುತ್ತದೆ.
ಮನುಸ್ಮೃತಿ ಇಲ್ಲಿ ತನ್ನ ಅಸ್ತಿತ್ವ ಮತ್ತು ಪ್ರಾಬಲ್ಯವನ್ನು ತೋರುತ್ತದೆ. ಅಪರಾಧದ ಶ್ರೇಣೀಕರಣ ಮತ್ತು ಅಪರಾಧಿಗಳ ಶ್ರೇಣೀಕರಣವನ್ನೂ ಸಹ ಮನುಸ್ಮೃತಿಯ ನೆಲೆಯಲ್ಲೇ ಇಂದಿನ ಆಡಳಿತ ವ್ಯವಸ್ಥೆ ನಿರೂಪಿಸುತ್ತಿದೆ. ನಾವು ಮತಧಾರ್ಮಿಕ ಅಸ್ಮಿತೆ, ಜಾತಿ ಅಸ್ಮಿತೆ ಮತ್ತು ರಾಜಕೀಯ ನಿಷ್ಠೆಯ ಹೆಸರಿನಲ್ಲಿ ಇದನ್ನು ಗಮನಿಸುತ್ತಿಲ್ಲ.
ಸ್ಟಾನ್ ಸ್ವಾಮಿ, ಆನಂದ ತೇಲ್ತುಂಬ್ಡೆ, ಸುಧಾ ಭರದ್ವಾಜ್, ಗೌತಮ್ ನವಲಖಾ, ವರಾವರರಾವ್, ಪ್ರೊ. ಸಾಯಿಬಾಬಾ ಇವರೆಲ್ಲರನ್ನೂ ಒಂದೆಡೆ ನಿಲ್ಲಿಸಿ ಅರ್ನಾಬ್ ಗೋಸ್ವಾಮಿಯನ್ನು ಮುಖಾಮುಖಿಯಾಗಿಸಿದಾಗ ನಮಗೆ ಮನುಸ್ಮೃತಿಯ ಶ್ರೇಣೀಕೃತ ವ್ಯವಸ್ಥೆಯ ವಿಕೃತ ಸ್ವರೂಪ ಸ್ಪಷ್ಟವಾಗಿ ಗೋಚರಿಸುತ್ತದೆ. ನವ ಬ್ರಾಹ್ಮಣ್ಯ ಸಾಮಾಜಿಕ ಮತ್ತು ಸಾಂಸ್ಕೃತಿಕ ನೆಲೆಯಲ್ಲಿ ಆಳವಾಗಿ ಬೇರೂರಿರುವಂತೆಯೇ ಆಡಳಿತ ವ್ಯವಸ್ಥೆಯಲ್ಲೂ ಬೇರೂರಿರುವುದನ್ನು ಈಗಲೂ ಗಮನಿಸದೆ ಹೋದರೆ ನಾವು ಸಂವಿಧಾನವನ್ನು ಕಳೆದುಕೊಳ್ಳುವ ಸಾಧ್ಯತೆಗಳೇ ಹೆಚ್ಚು.
ಡಾ ಅಂಬೇಡ್ಕರ್ ಮನುಸ್ಮೃತಿಯ ಮುದ್ರಿತ ಅಕ್ಷರಗಳನ್ನು ಸುಟ್ಟುಹಾಕುವ ಮೂಲಕ ತಮ್ಮ ಹಾಗೂ ತಾವು ಪ್ರತಿನಿಧಿಸುವ ಶೋಷಿತ ಸಮುದಾಯದ ಆಕ್ರೋಶವನ್ನು ಸಾಂಕೇತಿಕವಾಗಿ ವ್ಯಕ್ತಪಡಿಸಿದ್ದರು. ಈ ಘಟನೆ ನಡೆದು ಶತಮಾನ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ನಾವು ಸುಡಬೇಕಿರುವುದು ನಮ್ಮ ಮನಸಿನಲ್ಲಿ ಬೇರೂರಿರುವ ಆ ಸ್ಮೃತಿಯ ಬೇರುಗಳನ್ನು ,ಪಳೆಯುಳಿಕೆಗಳನ್ನು. ಸುಶಿಕ್ಷಿತ, ಆಧುನಿಕ, ಪಾಶ್ಚಾತ್ಯ ಚಿಂತನೆ ಮತ್ತು ದೇಸಿ ಸಂಸ್ಕೃತಿಯನ್ನು ಮೇಳೈಸಿಕೊಂಡಿರುವ ಮಧ್ಯಮ ವರ್ಗಗಳಲ್ಲಿ, ಹಿತವಲಯದ “ನಾಗರಿಕ ಪ್ರಜೆಗಳಲ್ಲಿ”, ಇವರ ಪ್ರಜ್ಞೆಯಲ್ಲಿ ಬೇರೂರಿರುವ ಮನು ನಿರ್ವಚಿಸಿದ ಸ್ಮೃತಿಯನ್ನು ಸುಡುವುದು ನಮ್ಮ ಆದ್ಯತೆಯಾಗಬೇಕಿದೆ. ಈ ಸ್ಮೃತಿಯಿಂದ ಹೊರತಾಗಿದ್ದೇವೆ ಎಂದು ಮೇಲ್ನೋಟಕ್ಕೆ ಪ್ರದರ್ಶಿಸಿಕೊಳ್ಳುತ್ತಲೇ ಮನುಸ್ಮೃತಿಯ ಆರಾಧಕರೊಡನೆ ಗುರುತಿಸಿಕೊಂಡಿರುವವರೂ ಇದನ್ನು ತಮ್ಮ ಆದ್ಯತೆ ಎಂದೇ ಪರಿಗಣಿಸಬೇಕಿದೆ.
ಇಲ್ಲವಾದಲ್ಲಿ ಇಂದು ಮದುವೆಯಾಗಲು ಮತಾಂತರ ನಿಷಿದ್ಧ ಎನ್ನುವ ವ್ಯವಸ್ಥೆ ನಾಳೆ ಜಾತಿ ದೌರ್ಜನ್ಯದಿಂದ ಬೇಸತ್ತು ಮತಾಂತರವಾಗುವುದನ್ನೂ ನಿಷೇಧಿಸುತ್ತದೆ. ಅಂತರ್ ಧರ್ಮೀಯ ವಿವಾಹಗಳಂತೆಯೇ ಅಂತರ್ ಜಾತಿ ವಿವಾಹಗಳೂ ಸಹ ಮಸಣದಲ್ಲಿ ನ್ಯಾಯ ಕೇಳಬೇಕಾದ ವಿದ್ಯಮಾನಗಳಾಗಿಬಿಡುತ್ತವೆ. ನಾವು ಗ್ರಂಥದತ್ತ ನೋಡುತ್ತಿದ್ದೇವೆ ಅವರು ಸ್ಮೃತಿಯನ್ನು ವ್ಯವಸ್ಥಿತವಾಗಿ ಬಿತ್ತುತ್ತಿದ್ದಾರೆ. ಇದು ಯೋಚಿಸಬೇಕಾದ ವಿಚಾರವಲ್ಲವೇ ?
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.
ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.
ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.
ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.
ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ
ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.
ಕನ್ನಡಿಗರ ಮನದ ಜಾನಕಿ
ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.
ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.
ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.
ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.
ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ
ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.
ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.
ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.
ಧ್ವನಿಯೊಳಗಿದ್ದ ಸಾವಿರ ರೂಪಗಳು
ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.
ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ
ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.
ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.
ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ
ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.
ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.
ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ
ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.
ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.
ಸರಳತೆಯೇ ಅವರ ಅಲಂಕಾರ
ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.
ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ
ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.
ಸಂಗೀತ ಲೋಕದ ಕಂಬನಿ
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.
ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ
ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.
ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.
ಸ್ವರ ಮೌನವಾದರೂ…
ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.
ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.
ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.
ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ
ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಮಹತ್ವದ ಜವಾಬ್ದಾರಿಯನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ನೀಡಿದೆ.
ಈ ನೇಮಕ ಕೇವಲ ಸಂಘಟನಾತ್ಮಕ ಬದಲಾವಣೆಯಲ್ಲ. ಕರ್ನಾಟಕ ಕಾಂಗ್ರೆಸ್ನ ಮುಂದಿನ ರಾಜಕೀಯ ದಿಕ್ಕು, ಪಕ್ಷದ ಒಳಾಂಗಣ ಸಮತೋಲನ ಮತ್ತು ಭವಿಷ್ಯದ ಚುನಾವಣಾ ತಂತ್ರಗಳಿಗೆ ಇದು ಪ್ರಮುಖ ಸೂಚನೆಯಾಗಿದೆ. ಹಲವು ದಶಕಗಳ ರಾಜಕೀಯ ಅನುಭವ, ಸಂಘಟನಾ ಕೌಶಲ್ಯ ಮತ್ತು ಹೈಕಮಾಂಡ್ಗೆ ನಿಕಟ ಸಂಪರ್ಕ ಹೊಂದಿರುವ ಹರಿಪ್ರಸಾದ್ ಅವರು ಈಗ ರಾಜ್ಯ ಕಾಂಗ್ರೆಸ್ನ ನೂತನ ಸಾರಥಿಯಾಗಿ ಹೊರಹೊಮ್ಮಿದ್ದಾರೆ.
ಆರಂಭಿಕ ಜೀವನ ಮತ್ತು ಶಿಕ್ಷಣ
ಬಿ.ಕೆ. ಹರಿಪ್ರಸಾದ್ ಅವರು 1954ರ ಜುಲೈ 29ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಎ. ಕೆಂಪಯ್ಯ ಹಾಗೂ ತಾಯಿ ಕೆ. ಗುಣಾವತಿ. ಬಾಲ್ಯದಿಂದಲೇ ಸಾಮಾಜಿಕ ಮತ್ತು ರಾಜಕೀಯ ಚಟುವಟಿಕೆಗಳತ್ತ ಆಸಕ್ತಿ ಹೊಂದಿದ್ದ ಅವರು ಬೆಂಗಳೂರಿನ ಎಂ.ಇ.ಎಸ್. ಕಾಲೇಜಿನಲ್ಲಿ ಬಿ.ಕಾಂ ಪದವಿ ಶಿಕ್ಷಣ ಪಡೆದರು. ವಿದ್ಯಾರ್ಥಿ ಜೀವನದಲ್ಲಿಯೇ ಕಾಂಗ್ರೆಸ್ ಚಟುವಟಿಕೆಗಳೊಂದಿಗೆ ಗುರುತಿಸಿಕೊಂಡ ಅವರು ಮುಂದೆ ಪೂರ್ಣಾವಧಿ ರಾಜಕಾರಣಿಯಾಗಿ ಬೆಳೆದರು.
ವಿದ್ಯಾರ್ಥಿ ರಾಜಕಾರಣದಿಂದ ರಾಷ್ಟ್ರೀಯ ಮಟ್ಟದ ನಾಯಕತ್ವದವರೆಗೆ
ಹರಿಪ್ರಸಾದ್ ಅವರ ರಾಜಕೀಯ ಬದುಕು ವಿದ್ಯಾರ್ಥಿ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಸಂಘಟನೆಗಳಿಂದ ಆರಂಭವಾಯಿತು. ಸಂಘಟನಾ ರಾಜಕಾರಣದಲ್ಲಿ ತೋರಿದ ಸಾಮರ್ಥ್ಯದಿಂದ ಅವರು ಶೀಘ್ರದಲ್ಲೇ ಪಕ್ಷದ ಹಿರಿಯ ನಾಯಕರ ಗಮನ ಸೆಳೆದರು.
ರಾಜ್ಯ ಮಟ್ಟದಲ್ಲಿ ಮಾತ್ರವಲ್ಲದೆ ರಾಷ್ಟ್ರೀಯ ಮಟ್ಟದಲ್ಲೂ ಕಾಂಗ್ರೆಸ್ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ ಅವರು, ಹಲವು ರಾಜ್ಯಗಳ ಕಾಂಗ್ರೆಸ್ ವ್ಯವಹಾರಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಹೈಕಮಾಂಡ್ನೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ನಾಯಕರಲ್ಲಿ ಹರಿಪ್ರಸಾದ್ ಪ್ರಮುಖರು ಎಂದು ಪರಿಗಣಿಸಲಾಗುತ್ತದೆ.
ಬಿ.ಕೆ. ಹರಿಪ್ರಸಾದ್ ಅವರು ಹಲವು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. 1990ರಿಂದಲೇ ಅವರು ರಾಷ್ಟ್ರೀಯ ರಾಜಕಾರಣದಲ್ಲಿ ಸಕ್ರಿಯ ಪಾತ್ರ ವಹಿಸುತ್ತಾ ಬಂದಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪರವಾಗಿ ಹಲವು ವಿಷಯಗಳ ಬಗ್ಗೆ ಧ್ವನಿ ಎತ್ತಿದ ಅವರು ಸಂಸತ್ತಿನ ಚರ್ಚೆಗಳಲ್ಲಿ ಗಮನ ಸೆಳೆದಿದ್ದರು.
ಅವರು ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಒಕ್ಕೂಟದ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ಆ ಸಂದರ್ಭದಲ್ಲಿ ಎನ್ಡಿಎ ಅಭ್ಯರ್ಥಿ ಹರಿವಂಶ್ ನಾರಾಯಣ್ ಸಿಂಗ್ ವಿರುದ್ಧ ಪೈಪೋಟಿ ನಡೆಸಿದ್ದರು. ಸೋಲು ಕಂಡಿದ್ದರೂ ರಾಷ್ಟ್ರೀಯ ರಾಜಕೀಯದಲ್ಲಿ ಅವರ ಸ್ಥಾನಮಾನ ಮತ್ತಷ್ಟು ಬಲವತ್ತಾಯಿತು.
1999ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿಯ ಹಿರಿಯ ನಾಯಕ ಅನಂತ್ ಕುಮಾರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಜಯ ಸಾಧಿಸಲು ಸಾಧ್ಯವಾಗದಿದ್ದರೂ ಅವರು ಕಾಂಗ್ರೆಸ್ನ ಪ್ರಮುಖ ಮುಖವಾಗಿ ಗುರುತಿಸಿಕೊಂಡರು.
ಸಂಘಟನಾ ರಾಜಕಾರಣದಲ್ಲಿ ಹೆಚ್ಚು ಸಕ್ರಿಯರಾಗಿದ್ದ ಕಾರಣ, ಚುನಾವಣಾ ಗೆಲುವಿಗಿಂತ ಪಕ್ಷ ನಿರ್ಮಾಣದಲ್ಲಿ ಅವರ ಪಾತ್ರವೇ ಹೆಚ್ಚು ಗಮನ ಸೆಳೆಯಿತು.
ಕಾಂಗ್ರೆಸ್ ಸಂಘಟನೆಯಲ್ಲಿ ‘ಟಾಸ್ಕ್ ಮಾಸ್ಟರ್’
ಕಾಂಗ್ರೆಸ್ ಪಕ್ಷದಲ್ಲಿ ಹರಿಪ್ರಸಾದ್ ಅವರನ್ನು ಸಂಘಟನಾ ತಜ್ಞ ಎಂದು ಕರೆಯಲಾಗುತ್ತದೆ. ಪಕ್ಷ ಎದುರಿಸಿದ ಸಂಕಷ್ಟದ ಸಂದರ್ಭಗಳಲ್ಲಿ ಹಲವು ರಾಜ್ಯಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿ ಸಂಘಟನೆಯನ್ನು ಬಲಪಡಿಸಿದ ಅನುಭವ ಅವರಿಗೆ ಇದೆ.
ಇತ್ತೀಚಿನ ಅವಧಿಯಲ್ಲಿ ಅವರು ಹರಿಯಾಣ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯ ರಾಜಕೀಯದ ಸೂಕ್ಷ್ಮ ಸಮೀಕರಣಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಮತ್ತು ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಸಾಧಿಸುವ ಶೈಲಿ ಅವರ ವಿಶೇಷತೆ ಎಂದು ಪಕ್ಷದ ನಾಯಕರು ಹೇಳುತ್ತಾರೆ.
ಕರ್ನಾಟಕ ಕಾಂಗ್ರೆಸ್ನಲ್ಲಿ ಹರಿಪ್ರಸಾದ್ ಅವರು ಹಲವು ದಶಕಗಳಿಂದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳ ಸಂದರ್ಭದಲ್ಲೂ ಅವರು ಸಮತೋಲನ ಸಾಧಿಸುವ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.
ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅವರು, 2022 ರಿಂದ 2023ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸರ್ಕಾರದ ನೀತಿಗಳ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸುವ ಮೂಲಕ ಅವರು ಗಮನ ಸೆಳೆದಿದ್ದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ
2026ರಲ್ಲಿ ಕರ್ನಾಟಕ ರಾಜಕೀಯದಲ್ಲಿ ನಡೆದ ನಾಯಕತ್ವ ಬದಲಾವಣೆಯ ಬಳಿಕ ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ. ಶಿವಕುಮಾರ್ ವಹಿಸಿಕೊಂಡರು. ಇದರ ಪರಿಣಾಮವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಪಕ್ಷದೊಳಗೆ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದರೂ ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿತು.
ಈ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹೈಕಮಾಂಡ್ ಸಂಘಟನಾ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿ ಪರಿಗಣಿಸಿದೆ. ಪಕ್ಷದ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮತೋಲನ ಕಾಯ್ದುಕೊಳ್ಳಲು ಹರಿಪ್ರಸಾದ್ ಅವರ ಅನುಭವ ನೆರವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಹಿಂದೆ ಹಲವು ರಾಜಕೀಯ ಕಾರಣಗಳಿವೆ. ಮೊದಲನೆಯದಾಗಿ, ಅವರು ಯಾವುದೇ ಒಂದು ಗುಂಪಿಗೆ ಸೀಮಿತವಾಗದ ನಾಯಕ ಎಂಬ ಚಿತ್ರಣ ಹೊಂದಿದ್ದಾರೆ. ಎರಡನೆಯದಾಗಿ, ಸಂಘಟನಾ ಅನುಭವ ಅಪಾರವಾಗಿದೆ. ಮೂರನೆಯದಾಗಿ, ಹೈಕಮಾಂಡ್ಗೆ ಅತ್ಯಂತ ವಿಶ್ವಾಸಾರ್ಹ ನಾಯಕರಲ್ಲಿ ಒಬ್ಬರು. ನಾಲ್ಕನೆಯದಾಗಿ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳು ಮತ್ತು ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಾಮರ್ಥ್ಯ ಅವರಿಗಿದೆ ಎಂದು ಕಾಂಗ್ರೆಸ್ ನಾಯಕತ್ವ ನಂಬಿದೆ.
ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಅವರ ಮುಂದಿರುವ ಸವಾಲುಗಳು ಸಣ್ಣದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಸಂಘಟನೆಯನ್ನು ಸದೃಢವಾಗಿಡುವುದು ದೊಡ್ಡ ಜವಾಬ್ದಾರಿ. ಕಾರ್ಯಕರ್ತರ ಅಸಮಾಧಾನ, ಸಚಿವ ಸ್ಥಾನಾಕಾಂಕ್ಷಿಗಳ ಒತ್ತಡ, ಪ್ರಾದೇಶಿಕ ಸಮೀಕರಣಗಳು ಮತ್ತು ಜಾತಿ ಆಧಾರಿತ ರಾಜಕೀಯ ಬೇಡಿಕೆಗಳನ್ನು ಸಮತೋಲನಗೊಳಿಸಬೇಕಾಗಿದೆ.
ಇದರ ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಸಂಘಟನೆಯನ್ನು ನಿರಂತರ ಚಟುವಟಿಕೆಯಲ್ಲಿ ಇರಿಸುವುದು ಅವರ ಪ್ರಮುಖ ಗುರಿಯಾಗಲಿದೆ.
ಹರಿಪ್ರಸಾದ್ ಅವರು ಹೆಚ್ಚು ಪ್ರಚಾರಪ್ರಿಯ ರಾಜಕಾರಣಿಯಲ್ಲ. ಸಂಘಟನೆಯೊಳಗೆ ಕೆಲಸ ಮಾಡುವ ನಾಯಕ ಎಂಬ ಹೆಗ್ಗಳಿಕೆ ಅವರಿಗೆ ಇದೆ. ಕಾರ್ಯಕರ್ತರೊಂದಿಗೆ ನೇರ ಸಂಪರ್ಕ, ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಮತ್ತು ತಾಳ್ಮೆಯ ರಾಜಕೀಯ ಅವರ ಕಾರ್ಯಶೈಲಿಯ ಮುಖ್ಯ ಲಕ್ಷಣಗಳು.
ಅವರ ರಾಜಕೀಯ ಜೀವನದಲ್ಲಿ ಅನೇಕ ಏರಿಳಿತಗಳು ಬಂದಿದ್ದರೂ ಪಕ್ಷದ ಮೇಲಿನ ನಿಷ್ಠೆ ಪ್ರಶ್ನಾತೀತವಾಗಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಹಲವು ಬಾರಿ ಅವರಿಗೆ ಪ್ರಮುಖ ಜವಾಬ್ದಾರಿಗಳನ್ನು ನೀಡಿದೆ.
ರಾಜಕೀಯದ ಜೊತೆಗೆ ಸರಳ ಜೀವನಶೈಲಿಗೆ ಹೆಸರುವಾಸಿಯಾಗಿರುವ ಹರಿಪ್ರಸಾದ್ ಅವರು ಉಷಾ ಅವರೊಂದಿಗೆ ದಾಂಪತ್ಯ ಜೀವನ ನಡೆಸುತ್ತಿದ್ದಾರೆ. ಅವರಿಗೆ ಒಬ್ಬ ಪುತ್ರಿಯಿದ್ದಾರೆ. ಕುಟುಂಬ ಜೀವನವನ್ನು ರಾಜಕೀಯದಿಂದ ಸಾಧ್ಯವಾದಷ್ಟು ದೂರ ಇಡುವ ನಾಯಕ ಎಂಬ ಹೆಸರನ್ನು ಅವರು ಗಳಿಸಿದ್ದಾರೆ.
ಭವಿಷ್ಯದ ರಾಜಕೀಯ ಪಾತ್ರ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಹರಿಪ್ರಸಾದ್ ಅವರ ರಾಜಕೀಯ ಜೀವನದ ಮತ್ತೊಂದು ಮಹತ್ವದ ಅಧ್ಯಾಯವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮನ್ವಯ ಸಾಧಿಸುವಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ.
ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ತಂತ್ರ ರೂಪಿಸುವುದು, ಕಾರ್ಯಕರ್ತರ ಬಲವರ್ಧನೆ, ಚುನಾವಣಾ ಸಿದ್ಧತೆ ಮತ್ತು ಹೈಕಮಾಂಡ್ನೊಂದಿಗೆ ಸಮನ್ವಯ ಸಾಧಿಸುವ ಪ್ರಮುಖ ಹೊಣೆಗಾರಿಕೆ ಅವರ ಮೇಲಿದೆ. ಈ ಎಲ್ಲ ಸವಾಲುಗಳನ್ನು ಅವರು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಕರ್ನಾಟಕ ಕಾಂಗ್ರೆಸ್ನ ಮುಂದಿನ ರಾಜಕೀಯ ಭವಿಷ್ಯ ಬಹುಮಟ್ಟಿಗೆ ಅವಲಂಬಿತವಾಗಿದೆ.
ಸುಮಾರು ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಕಾಂಗ್ರೆಸ್ ಸಂಘಟನೆಯಲ್ಲಿ ದುಡಿದಿರುವ ಬಿ.ಕೆ. ಹರಿಪ್ರಸಾದ್ ಇಂದು ಕರ್ನಾಟಕ ಕಾಂಗ್ರೆಸ್ನ ಅತ್ಯುನ್ನತ ಸಂಘಟನಾ ಹುದ್ದೆಯನ್ನು ಅಲಂಕರಿಸಿದ್ದಾರೆ. ವಿದ್ಯಾರ್ಥಿ ರಾಜಕಾರಣದಿಂದ ಆರಂಭವಾದ ಅವರ ಪಯಣ ರಾಜ್ಯಸಭೆ, ರಾಷ್ಟ್ರೀಯ ಸಂಘಟನೆ, ವಿಧಾನ ಪರಿಷತ್ ಮತ್ತು ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನವರೆಗೆ ತಲುಪಿದೆ.
ಅನುಭವ, ಸಂಘಟನಾ ಕೌಶಲ್ಯ, ರಾಜಕೀಯ ಪ್ರೌಢಿಮೆ ಮತ್ತು ಪಕ್ಷದ ಮೇಲಿನ ನಿಷ್ಠೆ ಎಂಬ ನಾಲ್ಕು ಅಂಶಗಳು ಅವರ ರಾಜಕೀಯ ವ್ಯಕ್ತಿತ್ವದ ಪ್ರಮುಖ ಗುರುತುಗಳಾಗಿವೆ. ಕರ್ನಾಟಕ ಕಾಂಗ್ರೆಸ್ ಹೊಸ ರಾಜಕೀಯ ಹಾದಿಯಲ್ಲಿ ಸಾಗುತ್ತಿರುವ ಈ ಸಂದರ್ಭದಲ್ಲಿ, ಬಿ.ಕೆ. ಹರಿಪ್ರಸಾದ್ ಅವರ ನಾಯಕತ್ವ ಪಕ್ಷಕ್ಕೆ ಹೊಸ ಶಕ್ತಿ ತುಂಬುತ್ತದೆಯೇ ಎಂಬುದನ್ನು ರಾಜ್ಯದ ರಾಜಕೀಯ ಕುತೂಹಲದಿಂದ ಗಮನಿಸುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243



