ಬಹಿರಂಗ
ಮನುವಾದ ಮತ್ತು ಸಂವಿಧಾನ : ಹೆಣ್ಣಿನ ಅಸ್ಮಿತೆಯ ಪ್ರಶ್ನೆ
- ಮಂಜುಳಾ.ಟಿ, ಉಪನ್ಯಾಸಕರು, ದಾವಣಗೆರೆ
ಭಾರತೀಯ ಸಂಸ್ಕøತಿಯಲ್ಲಿ ಹೆಣ್ಣಿಗೆ ನೀಡಿರುವ ಗೌರವ ಹಾಗೂ ಉನ್ನತ ಸ್ಥಾನವನ್ನು ಜಗತ್ತಿನ ಯಾವುದೇ ಸಂಸ್ಕøತಿಯಲ್ಲಿ ನೀಡಿರಲಿಕ್ಕೆ ಸಾಧ್ಯವಿಲ್ಲ. ಇಲ್ಲಿ ಹೆಣ್ಣನ್ನು ಭೂಮಿ, ಲಕ್ಷ್ಮೀ, ಸರಸ್ವತಿ, ನದಿ, ಪ್ರಕೃತಿಯ ಪ್ರತಿರೂಪವಾಗಿ ಆರಾಧಿಸಲಾಗಿದೆ. ಹಾಗೆಯೇ ‘ಎಲ್ಲಿ ಹೆಣ್ಣನ್ನು ಪೂಜಿಸಲಾಗುತ್ತದೆಯೋ ಅಲ್ಲಿ ಸಕಲ ದೇವಾನುದೇವತೆಗಳು ನೆಲೆಸಿರುತ್ತಾರೆ’ ಎಂಬ ವಾಕ್ಯವನ್ನು ಪರಿಪಾಲಿಸಿಕೊಂಡು ಬರಲಾಗಿದೆ.
ಇಷ್ಟೊಂದು ಉನ್ನತವಾದ ಸ್ಥಾನಮಾನವನ್ನು ನೀಡಿರುವ ಭಾರತೀಯ ಸಂಸ್ಕøತಿಯಲ್ಲಿಯೇ ಹೆಣ್ಣನ್ನು ಧಾರ್ಮಿಕ ಚೌಕಟ್ಟಿನ ಅಡಿಯಲ್ಲಿ ನಿರಂತವಾಗಿ ಬಂಧಿಸಲಾಗಿದೆ. ಹೆಣ್ಣಿಗೆ ಇರಬೇಕಾದ ಪ್ರಕೃತಿ ಸಹಜವಾಗಿ ಲಭಿಸಬೇಕಾಗ ಸಮಾನ ಅವಕಾಶಗಳನ್ನು ವಂಚಿಸಲಾಗಿದೆ. ಹೆಣ್ಣನ್ನು ಲಿಂಗತಾರತಮ್ಯದ ನೆಲೆಯಲ್ಲಿ ಅವಕಾಶ ವಂಚಿತಳನ್ನಾಗಿಸಲು ‘ಮನು’ ಎಂಬ ಹಿಂದುತ್ವದ ಪ್ರತಿಪಾದಕ ಹಗಲಿರುಳು ಶ್ರಮಿಸಿರುವುದಕ್ಕೆ ‘ಮನುಧರ್ಮಶಾಸ್ತ್ರ’ವು ಜೀವಂತ ಸಾಕ್ಷಿಯಾಗಿ ಕಂಡುಬರುತ್ತದೆ.
ಮನುವಾದವು ಭಾರತೀಯ ಸಂಸ್ಕøತಿಯಲ್ಲಿ ಹೆಣ್ಣನ್ನು ಧಾರ್ಮಿಕ ಕಟ್ಟುಪಾಡುಗಳ ಅಡಿಯಲ್ಲಿ ಬಂಧಿಸುವುದಕ್ಕೆ ಒಂದು ಪ್ರಬಲ ಅಸ್ತ್ರವಾಗಿ ಕಾರ್ಯನಿರ್ವಹಿಸುತ್ತ ಬಂದಿದೆ. ಹೆಣ್ಣನ್ನು ಅಧಿಕಾರ ಹಾಗೂ ಹಕ್ಕುಗಳಿಂದ ವಂಚಿಸುವುದಕ್ಕೆ ರೂಪಿಸಿದಂತಹ ಶ್ಲೋಕದ ಮಾದರಿಯೊಂದು ಹೀಗಿದೆ;
ಅಸ್ವತಂತ್ರಾಃ ಸ್ತ್ರಿಯಃ ಕಾರ್ಯಾಃ ಪುರಸೈಃ ಸೈರ್ದಿವಾನಿಶಂ|
ವಿಷಯೇಷು ಚ ಸಜ್ಜಂತ್ಯಃ ಸಂಸ್ಥಾಪ್ಯಾ ಆತ್ಮನೋ ವಶೇ|| (ಮನುಸ್ಮøತಿ ಶ್ಲೋಕ-9.2)
ಮನುವಿನ ಈ ಧಾರ್ಮಿಕ ಶ್ಲೋಕದ ಆಶಯವೆಂದರೆ, “ಅಸ್ವತಂತ್ರ್ಯ ಅಂದರೆ ಸ್ವಾತಂತ್ರ್ಯವಿಲ್ಲದಿರುವುದೆ ಹೆಣ್ಣಿನ ಕಾರ್ಯಪ್ರವೃತ್ತಿಯಾಗಿದ್ದು, ಆಕೆ ಸ್ವಾತಂತ್ರ್ಯವನ್ನು ಬಯಸಬಾರದು. ಪುರುಷ ವಂಶವನ್ನು ಮುಂದುವರೆಸುವ ಕಾರ್ಯವು ಹೆಣ್ಣಿನ ಜವಬ್ದಾರಿಯಾಗಿದೆ. ಹೆಣ್ಣು ಈ ಹೊರೆಯನ್ನು ಯಶಸ್ವಿಯಾಗಿ ನಿರ್ವಹಿಸಬೇಕಾದರೆ ಗಂಡಿನ ವಶದಲ್ಲಿಯೇ ಇರಬೇಕು” ಎಂಬುದನ್ನು ಇದು ಪ್ರತಿಪಾದಿಸುತ್ತದೆ.
ಇಲ್ಲಿ ರಾಜಕೀಯ ಅಧಿಕಾರ, ಉದ್ಯೋಗ, ಧನಾರ್ಜನೆಗಳಿಗಿಂತ ಪುರುಷ ಸಂತತಿಯ ಪಾಲನೆ ಮತ್ತು ಪೋಷಣೆ ಹೆಣ್ಣಿನ ಕರ್ತವ್ಯವೆಂದು ಆರೋಪಿಸಲಾಗಿದೆ. ಹೆಣ್ಣು ಸ್ವಾತಂತ್ರ್ಯ ಪಡೆದು ಸಾಧನೆ ಮಾರ್ಗವನ್ನು ತುಳಿದರೆ ಪುರುಷನಿಗೆ ಯಾವುದೇ ಅಸ್ತಿತ್ವವಿರುವುದಿಲ್ಲ. “ಗಾಳಿಗೆ ಹಾರಿಹೋಗುವ ಬೀಜ ಒಂದು ಹೆಮ್ಮರವಾಗಿ ಬೆಳೆದು ನೂರಾರು ಪಕ್ಷಿಗಳಿಗೆ ಆಶ್ರಯ ತಾಣವಾಗುತ್ತದೆ. ಹೆಣ್ಣು ಅಂತಹ ಶಕ್ತಿಯೊಂದಿಗೆ ತನ್ನನ್ನು ಆರೋಪಿಸಿಕೊಂಡು ಹೆಮ್ಮರವಾಗಿ ಬೆಳೆಯುವ ಸಂಕಲ್ಪ ಮಾಡುವುದು ಪುರುಷನ ಉದ್ದೇಶಿತ ಗುರಿ ಸಾಧನೆಗೆ ಆತಂಕಕಾರಿ”.
ಜೀವನದಂತೆ ಸದಾ ಚಲನೆಯನ್ನು ಒಮ್ಮುಖವಾಗಿ ಮಾಡಿಕೊಂಡಿರುವ ಹಾಗೂ ತನ್ನ ಹರಿವಿನ ಪಾತ್ರದುದ್ದಕ್ಕೂ ಸಾವಿರಾರು ಜೀವರಾಶಿಗೆ ಜೀವನದ ಉಸಿರಾಗಿರುವ ಜೀವಂತ ನದಿ ಹೆಣ್ಣಿನ ಅದಮ್ಯ ಅಂತಸ್ಥ ಶಕ್ತಿಯನ್ನು ಚಿಗುರಿಸಿಬಿಟ್ಟರೆ ಪುರುಷನ ಅಧೀನದಲ್ಲಿ ಉಳಿಯುವುದು ಸಾಧ್ಯವಿಲ್ಲ. ಬೆಟ್ಟ, ಗುಡ್ಡ, ಪರ್ವತಗಳ ಅಚಲ ಮತ್ತು ಗಟ್ಟಿತನದ ಮನಸ್ಸಿನವಳಾಗಿ ಹೆಣ್ಣು ರೂಪ ತಳೆದುಬಿಟ್ಟರೆ ಗಂಡಸ್ಸಿನ ಪ್ರಾಬಲ್ಯ ಉಳಿಯುವುದಿಲ್ಲ.
ತನ್ನ ವಂಶ ಪರಂಪರೆಯ ಸ್ಥಾಪನೆ ಹಾಗೂ ಈ ಮೂಲಕ ತಾನು ಸಾಧಿಸಬೇಕಿರುವ ಪುರುಷಾರ್ಥ ಸಾಧನೆಗೆ ಬಲಿಷ್ಠನಾದ ಶ್ರಮ ಸಂಸ್ಕøತಿಯಲ್ಲಿ ಹುಟ್ಟಿದವನ ಶಕ್ತಿ ನಿಜವಾಗಿಯೂ ತೊಡರುಗಾಲಾಗಿ ಮಣಿಸಲಾಗದಂಥ ಸವಾಲಾಗಿತ್ತು. ಮನುವಿಗೆ ಇಂಥವರ ಹೆಸರು ಪಡೆದ ತನ್ನ ವೈರಿ ಪಡೆಯಂತೆಯೇ ಹೆಣ್ಣು ಬಲಿಷ್ಠಳಾಗಿ ತನ್ನ ಮನಸ್ಸನ್ನು ಬೆಳೆಸಿಕೊಂಡ ಪಕ್ಷದಲ್ಲಿ ಪುರುಷನು ತನ್ನ ಉದ್ದೇಶ ಸಾಧಿಸಲಾಗುವುದಿಲ್ಲ.” (ಅನಸೂಯ. ಎಂ. ಕದಂ, ಮಹಿಳಾ ಶೋಷಣೆಯ ನೆಲೆಗಳು, ಪು-110, 111) ಆದ್ದರಿಂದ ಹೆಣ್ಣು ಯಾವಾಗಲೂ ಪುರುಷನ ಅಧೀನದಲ್ಲಿಯೇ ಬಾಳಬೇಕು ಎಂಬುದು ಮನುವಿನ ನಿಲುವಾಗಿದೆ. ಆದ ಕಾರಣ ಹೆಣ್ಣನ್ನು ಬಂಧಿಸುವ ಅವೈಜ್ಞಾನಿಕ ಕಟ್ಟುಪಾಡುಗಳನ್ನು ಧಾರ್ಮಿಕ ನೆಲೆಗಟ್ಟಿನಲ್ಲಿ ಪ್ರತಿಪಾದಿಸಿದ ಕೀರ್ತಿ ಮನುವಿಗೆ ಸಲ್ಲುತ್ತದೆ.
ಸಾವಿರಾರು ವರ್ಷಗಳಿಂದ ಮನುವಿನ ‘ಧರ್ಮಶಾಸ್ತ್ರ’ವು ಹೆಣ್ಣಿನ ಸ್ವಾಭಿಮಾನದ ಬದುಕನ್ನು ಹತ್ತಿಕ್ಕುವಲ್ಲಿ ಯಶಸ್ವಿಯಾಯಿತು. ಈ ಧರ್ಮಶಾಸ್ತ್ರದ ಚೌಕಟ್ಟುಗಳನ್ನು ಮೀರಿದವರನ್ನು ರಾಕ್ಷಸಿ, ವೇಶ್ಯೆ ಎಂಬಿತ್ಯಾದಿಯಾದ ಪಟ್ಟಗಳನ್ನು ಕಟ್ಟುವ ಮೂಲಕ ಮನುವಾದವನ್ನು ಕಾಪಾಡಿಕೊಂಡು ಬರಲಾಯಿತು. ಆದರೆ ಭಾರತಕ್ಕೆ ಬಂದ ಬ್ರಿಟಿಷರಿಂದಾಗಿ ಮನುವಿನ ಧರ್ಮಶಾಸ್ತ್ರದ ಕಟ್ಟುಪಾಡುಗಳಿಗೆ ಧಕ್ಕೆ ಉಂಟಾಯಿತು. ಭಾರತದ ಮೇಲೆ ರಾಜಕೀಯ ಹಿಡಿತ ಸಾಧಿಸಲು ಮುಂದಾದ ಬ್ರಿಟಿಷರಿಗೆ ಇಲ್ಲಿನ ಸಾಂಸ್ಕøತಿಕ ಆಯಾಮಗಳನ್ನು ಸೂಕ್ಷ್ಮವಾಗಿ ಗ್ರಹಿಸಿದರು.
ಇಂತಹ ಸಂದರ್ಭದಲ್ಲಿ ಹೆಣ್ಣನ್ನು ‘ಕೀಳಾಗಿ’ ನಡೆಸಿಕೊಳ್ಳುತ್ತಿರುವ ಅಂಶಗಳ ಬದಲಾವಣೆಗಾಗಿ ಶ್ರಮಿಸಿದರು. ಇದರ ಫಲವಾಗಿಯೇ ಹೆಣ್ಣಿಗೆ ಶಿಕ್ಷಣ ನೀಡುವಂತಹ ಮಹತ್ವದ ಯೋಜನೆಗೆ ಮುಂದಾದರು. ಹಾಗೆಯೇ ಸತಿ ಪದ್ಧತಿ, ವಿಧವಾ ಪದ್ಧತಿಯಂತ ಅಮಾನವೀಯ ಸಂಪ್ರದಾಯಗಳನ್ನು ತೀವ್ರವಾಗಿ ವಿರೋಧಿಸಿದರು. ಇದರ ಫಲವಾಗಿ ಹೆಣ್ಣಿಗೆ ಒಂದಿಷ್ಟು ಮುಕ್ತವಾದ ಅವಕಾಶಗಳು ಲಭಿಸಿದವು. “ಸ್ವಾತಂತ್ರ್ಯಪೂರ್ವ ಕಾಲಘಟ್ಟದಲ್ಲಿ ಮಹಿಳೆಯರ ಪರವಾಗಿ ರೂಪುಗೊಳ್ಳುತ್ತಿದ್ದ ಈ ತಾತ್ವಿಕತೆಗಳು ಭಾರತೀಯ ಸಮಾಜ ಮತ್ತು ಸಂಸ್ಕøತಿಯಲ್ಲಿ ಅಪಾರವಾದ ಬದಲಾವಣೆಯನ್ನು ಉಂಟುಮಾಡಿದವು ಎನ್ನುವುದು ನಿಜ.
ಮಹಿಳೆಯರು ಶಿಕ್ಷಣ ಪಡೆಯಲಾರಂಭಿಸಿದರು, ಬರೆಯಲಾರಂಭಿಸಿದರು, ಕನ್ನಡದಲ್ಲಿ ತಿರುಮಲಾಂಬ ಅವರಂಥವರು ಪತ್ರಿಕೆಗಳನ್ನು ಪ್ರಾರಂಭಿಸಿ, ಮಹಿಳೆಯರ ಪರ ದನಿ ಎತ್ತಲಾರಂಭಿಸಿದರು. ಮುಖ್ಯವಾಹಿನಿಯತ್ತ ಮಹಿಳೆಯರು ಹೀಗೆ ಚಲಿಸುತ್ತಿರುವ ಸಂದರ್ಭದಲ್ಲಿಯೇ, ಈ ಹಾದಿಯಲ್ಲಿಯೇ ಅವರಿಗೆ ಎರಡನ್ನುಂಟು ಮಾಡುವಂಥ ಏರು ತಗ್ಗುಗಳಿದ್ದವು ಎನ್ನುವುದು ನಿಧಾನವಾಗಿ ಅವರ ಅರಿವಿಗೆ ಬರ ತೊಡಗಿತು.” (ಮಹಿಳಾ ಸಬಲೀಕರಣವೆಂಬುದೇ ರಾಜಕಾರಣ (ಸಂ), ಎಚ್.ಡಿ.ಪ್ರಶಾಂತ್, ಪು-2) ಹೀಗೆ ಪ್ರಾರಂಭವಾದ ಮಹಿಳೆಯರ ಅಸ್ತಿತ್ವದ ಪಯಣವು ಮುಂದೆ ಸ್ವಾಭಿಮಾನದೆಡೆಗೆ ಸಾಗಿತು.
ಮಹಿಳೆಯರು ಸಂಘ ಸಂಸ್ಥೆಗಳನ್ನು ಕಟ್ಟಿಕೊಂಡು ತಮ್ಮ ಬದುಕಿನ ಬದಲಾವಣೆಗಾಗಿ ಹೋರಾಟ ನಡೆಸಿದರು. ಈ ಸಂದರ್ಭದಲ್ಲಿ ಸಾಂಪ್ರದಾಯಿಕ ಬದುಕಿನ ಮೌಲ್ಯಗಳು ಹಾಗೂ ಆಧುನಿಕತೆಯ ನಡುವೆ ಸಮತೋಲವನ್ನು ಕಾಯ್ದುಕೊಳ್ಳುವ ಮೂಲಕ ವಿಕಾಸದೆಡೆಗೆ ಸಾಗಬೇಕಾದ ಜವಬ್ದಾರಿಯು ಮಹಿಳೆಯರ ಮೇಲಿತ್ತು.
ಸ್ವಾತಂತ್ರ್ಯಪೂರ್ವ ಕಾಲಘಟ್ಟದ ಮಹಿಳೆಯರಿಗಿಂತ ಸ್ವಾತಂತ್ರ್ಯೋತ್ತರ ಕಾಲದ ಮಹಿಳೆಯರ ಬದುಕಿನಲ್ಲಿ ಹೊಸ ಸಂಚಲನವೊಂದು ಮೂಡಿತು. “ಸ್ವಾತಂತ್ರ್ಯೋತ್ತರ ಕಾಲದಲ್ಲಿ ಮಹಿಳೆಯರಲ್ಲಿ ಭರವಸೆಯನ್ನು ಉಂಟುಮಾಡಿದ ಎರಡು ಮುಖ್ಯವಾದ ಬೆಳವಣಿಗೆಗಳನ್ನು ಗುರುತಿಸಬಹುದು. ಒಂದು- ಪ್ರಜಾಸತ್ತಾತ್ಮಕವಾದ ಆಡಳಿತ. ಇದು ಮಹಿಳೆಯರಿಗೆ ಸಮಾನತೆ ಮತ್ತು ಸ್ವಾತಂತ್ರ್ಯವನ್ನು ನೀಡುವುದರೊಂದಿಗೆ ಅದನ್ನು ಮೂಲಭೂತ ಹಕ್ಕನ್ನಾಗಿಸಿದ ಸಂವಿಧಾನವನ್ನೂ ಕಟ್ಟಿತು.
ಎರಡನೆಯದಾಗಿ, ಸಂವಿಧಾನದಲ್ಲಿ ಮಂಡಿಸಲಾದ ‘ಯೂನಿಫಾರಂ ಸಿವಿಲ್ ಕೋಡ್’ ಹಲವರ ಗಮನವನ್ನು ಸೆಳೆದರೂ, ಭಾರತದ ಸಾಂಪ್ರದಾಯಿಕ ಸಮಾಜಕ್ಕೆ ಅದನ್ನು ಅರಗಿಸಿಕೊಳ್ಳಲು ಆಗಲಿಲ್ಲ; ಆದ್ದರಿಂದ ಅದರ ಚರ್ಚೆಗಳು ಮುಂದಕ್ಕೆ ಹಾಕಲ್ಪಟ್ಟವು.” (ಮಹಿಳಾ ಸಬಲೀಕರಣವೆಂಬುದೇ ರಾಜಕಾರಣ (ಸಂ), ಎಚ್.ಡಿ.ಪ್ರಶಾಂತ್, ಪು-3) ಮಹಿಳೆಯರ ಪರವಾದ ಇಂತಹ ಮಾನವೀಯ ಅಂಶಗಳನ್ನು ಸಹಿಸಿಕೊಳ್ಳುವುದು ಸನಾತನವಾದಿ ಮನಸ್ಸುಗಳಿಗೆ ಕಷ್ಟವಾಗಿತ್ತು.
ಡಾ.ಬಿ.ಆರ್.ಅಂಬೇಡ್ಕರ್ ಅವರು ಮಹಿಳೆಯರ ಪ್ರಗತಿಯಿಂದ ಮಾತ್ರ ದೇಶದ ಅಭಿವೃದ್ದಿಯಾಗಲು ಸಾಧ್ಯ ಎಂದು ನಂಬಿದವರು. ಜಗತ್ತಿನ ಯಾವ ದೇಶ ಹೆಣ್ಣನ್ನು ನಿಕೃಷ್ಟವಾಗಿ ನಡೆಸಿಕೊಂಡಿದೆಯೋ ಆ ರಾಷ್ಟ್ರವು ಪ್ರಗತಿಯಲ್ಲಿ ಹಿನ್ನಡೆಯನ್ನು ಕಂಡುಕೊಂಡಿದೆ ಎಂಬುದಾಗಿ ಅರಿತವರು. ಈ ಕಾರಣಕ್ಕಾಗಿಯೇ ಅವರು ಮಹಿಳೆಯರನ್ನು ಸಮಾನವಾಗಿ ಕಾಣುವಂತಹ ‘ಹಿಂದೂ ಕೋಡ್ಬಿಲ್’ ಎನ್ನುವಂತಹ ಹೊಸ ಮಸೂದೆಯನ್ನು ಮಂಡಿಸಿದಾಗ ಸಾಕಷ್ಟು ವಿರೋಧಗಳು ಕೇಳಿಬಂದವು. ‘ಯೂನಿಫಾರಂ ಸಿವಿಲ್ ಕೋಡ್’ ಅನ್ನು ಸಂವಿಧಾನ ಸಭೆಯಲ್ಲಿ ಮಂಡಿಸಿದಾಗ ಅದು ಎಷ್ಟು ತೀವ್ರವಾದ ವಿರೋಧವನ್ನು ಪಡೆದುಕೊಂಡಿತೆಂದರೆ, ಸಭೆಯಲ್ಲಿದ್ದ ಮಹಿಳೆಯರು ಕೂಡ ಅದರ ಬಗ್ಗೆ ಅನುಮಾನ ವ್ಯಕ್ತಪಡಿಸಿದರು.
ಶತಮಾನಗಳ ಕಾಲ ದಾಸ್ಯದಿಂದ ಬಳಲುತ್ತಿದ್ದ ಬ್ರಾಹ್ಮಣ ವರ್ಗದಿಂದ ಅಸ್ಪøಶ್ಯ ಸಮುದಾಯದವರೆಗಿನ ಎಲ್ಲ ಹೆಣ್ಣಿಗೂ ಸ್ವಾಭಿಮಾನ ಮತ್ತು ಸ್ವಾತಂತ್ರ್ಯವನ್ನು ಕಲ್ಪಿಸಿಕೊಟ್ಟಿದ್ದು ಸಂವಿಧಾನ. ಭಾರತೀಯ ಸ್ತ್ರೀ ಕುಲವೇ ಸಂವಿಧಾನಕ್ಕೆ ಮತ್ತು ಸಂವಿಧಾನದ ನಿರ್ಮಾತೃವಿಗೆ ಋಣಿಗಳಾಗಿರಬೇಕು. “ಸ್ವಾತಂತ್ರ್ಯಾನಂತರವೂ ಮಹಿಳೆಯರು ಘನತೆ ಮತ್ತು ಸ್ವಾತಂತ್ರ್ಯದಿಂದ ಬದುಕಲು ದಿನನಿತ್ಯ ಹೋರಾಡಬೇಕಾಗಿದೆ. ದೈಹಿಕವಾಗಿ, ಮಾನಸಿಕವಾಗಿ ಎಲ್ಲ ಹಂತಗಳಲ್ಲೂ ಸೆಣಸಬೇಕಾಗಿದೆ.
ನಮ್ಮ ಸಂವಿಧಾನದ ಪೀಠಿಕಾ ಭಾಗದಲ್ಲಿ, ರಾಜ್ಯ ನಿರ್ದೇಶಕ ತತ್ವಗಳಲ್ಲಿ, ಮೂಲಭೂತ ಹಕ್ಕುಗಳಲ್ಲಿ ಮತ್ತು ಕಾನೂನಾತ್ಮಕವಾಗಿ ನೀಡಲ್ಪಟ್ಟ ಅವಕಾಶಗಳಲ್ಲಿ ಭಾರತೀಯ ಮಹಿಳೆಯರು ಎದುರಿಸುವ ತಾರತಮ್ಯ, ಅವಕಾಶಹೀನತೆಗೆ ಪರಿಹಾರಗಳಿವೆ. ಅದು ಮಹಿಳೆಯರನ್ನುಸಶಕ್ತೀಕರಣಗೊಳಿಸುವುದಲ್ಲದೆ, ಅವಶ್ಯ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಅಧಿಕಾರವನ್ನೂ ನೀಡಿದೆ.” (ಸಂವಿಧಾನ ಮತ್ತು ಮಹಿಳೆ, ಎಚ್.ಎಸ್.ಅನುಪಮಾ, ಪು-50) ಆ ಮೂಲಕ ದಾಸ್ಯಕ್ಕೆ ಒಳಗಾದ ಪುರುಷ ಪ್ರಧಾನ ಸಮಾಜದಲ್ಲಿ ಸ್ವಾಭಿಮಾನದ ವೇದಿಕೆಯನ್ನು ಸಂವಿಧಾನ ಕಲ್ಪಿಸಿಕೊಟ್ಟಿದೆ.
ಭಾರತೀಯ ಸಂವಿಧಾನದಲ್ಲಿ ಮಹಿಳೆಯ ಅಸ್ತಿತ್ವ ಹಾಗೂ ಸಬಲೀಕರಣಕ್ಕಾಗಿಯೇ ರೂಪಿತವಾಗಿರುವ ಸಂವಿಧಾನಾತ್ಮಕ ಹಕ್ಕುಗಳು ಈ ಮುಂದಿನಂತಿವೆ.
- ಅನುಚ್ಚೇದ-14, ಇದು ಭಾರತೀಯ ಪ್ರಜೆಗಳೆಲ್ಲರೂ ಸಮಾನರು ಎಂಬುದನ್ನು ಎತ್ತಿಹಿಡಿದಿದೆ.
- ಅನುಚ್ಚೇದ-15, ಸಾಮಾಜಿಕ ನ್ಯಾಯ ಮತ್ತು ಸಾರ್ವಜನಿಕ ಸ್ಥಳಗಳಿಗೆ ಮುಕ್ತವಾದ ಅವಕಾಶ ನೀಡಿದೆ. ಆದರೆ ಇಂದಿಗೂ ಧಾರ್ಮಿಕತೆಯ ನೆಪದಲ್ಲಿ ಕೆಲವೊಂದು ಪ್ರದೇಶಗಳಿಗೆ ಅವಕಾಶವನ್ನು ನಿರಾಕರಿಸಲಾಗಿದೆ.
- ಅನುಚ್ಚೇದ-16(2), ಇದು ಲಿಂಗದ ಕಾರಣಕ್ಕಾಗಿ ಯಾರಿಗೂ ಉದ್ಯೋಗ ನಿರಾಕರಣೆ, ಉದ್ಯೋಗದಲ್ಲಿ ತಾರತಮ್ಯ ಮಾಡುವಂತಿಲ್ಲ ಎಂಬುದಾಗಿ ಪ್ರತಿಪಾದಿಸುತ್ತದೆ.ಆದರೆ ಈ ಲಿಂಗ ತಾರತಮ್ಯದ ಬೇರುಗಳನ್ನು ಇಂದಿಗೂ ಕೀಳಲು ಸಾಧ್ಯವಾಗುತ್ತಿಲ್ಲ. ಈ ತಾರತಮ್ಯದ ಫಲವಾಗಿ ಇಂದಿಗೂ ಹೆಣ್ಣುಶಿಶುಗಳು ಹತ್ಯೆ ನಿರಂತರವಾಗಿ ನಡೆಯುತ್ತಿದೆ.
- ಅನುಚ್ಚೇದ-19, ಇದು ಸ್ವಾತಂತ್ರ್ಯದ ಹಕ್ಕುಗಳನ್ನು ಕಲ್ಪಿಸಿಕೊಟ್ಟಿದೆ. ಇಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ, ಓಡಾಡುವ ಸ್ವಾತಂತ್ರ್ಯ, ವ್ಯಾಪಾರ, ವೃತ್ತಿ ನಡೆಸುವ ಸ್ವಾತಂತ್ರ್ಯವನ್ನು ಎಲ್ಲರಿಗೂ ಮುಕ್ತವಾಗಿ ಕಲ್ಪಿಸಲಾಗಿದೆ. ಆದರೆ ಭಾರತೀಯ ಸಾಂಪ್ರದಾಯಿಕ ವ್ಯವಸ್ಥೆಯಲ್ಲಿ ಹೆಣ್ಣು ಎಂಬ ಕಾರಣಕ್ಕಾಗಿ ಈ ಎಲ್ಲಾ ಸ್ವಾತಂತ್ರ್ಯಗಳನ್ನು ಇಂದಿಗೂ ಹತ್ತಿಕ್ಕುವಂತಹ ಸಂದರ್ಭಗಳು ನಮ್ಮ ಮುಂದಿವೆ.
- ಅನುಚ್ಚೇದ-21, ಇದು ಸ್ತ್ರೀ ಪುರುಷರೆಲ್ಲರಿಗೂ ವೈಯಕ್ತಿಕ ಸ್ವಾತಂತ್ರ್ಯ ಹಾಗೂ ಘನತೆಯಿಂದ ಬದುಕುವ ಸಮಾನ ಹಕ್ಕುಗಳನ್ನು ಪ್ರತಿಪಾದಿಸುತ್ತದೆ.
- ಅನುಚ್ಚೇದ-32, ತನ್ನ ಹಕ್ಕಿಗೆ ಚ್ಯುತಿ ಬಂದರೆ ಸುಪ್ರಿಂಕೋರ್ಟಿಗೆ ಸಂವಿಧಾನಿಕ ಪರಿಹಾರಕ್ಕಾಗಿ ಮೊರೆ ಹೋಗುವ ಅವಕಾಶ ನೀಡಿದೆ.
- ಅನುಚ್ಚೇದ-39(ಎ.ಡಿ.ಇ), ಇವು ಸ್ತ್ರೀ ಪುರುಷರು ಸಮಾನವಾಗಿ ಬದುಕುವ ಅವಕಾಶ, ಸಮಾನ ಕೆಲಸಕ್ಕೆ ಸಮಾನ ವೇತನ, ಮಹಿಳಾ ಉದ್ಯೋಗಿಗಳ ಆರೋಗ್ಯ ಮತ್ತು ಸಾಮಥ್ರ್ಯ ಕುಂದುವಂತಹ ಅತಿಕೆಲಸ ಹಾಗೂ ಆರ್ಥಿಕ ಅವಶ್ಯಕತೆಯ ಕಾರಣವಾಗಿ ತಮ್ಮ ಸಾಮಥ್ರ್ಯಕ್ಕೆ ಹೊಂದದ ಉದ್ಯೋಗ ಮಾಡುವುದು ಅನಿವಾರ್ಯ ಆಗದಂತೆ ಪ್ರಭುತ್ವ ನೋಡಿಕೊಳ್ಳಬೇಕು ಎಂಬುದಾಗಿ ಪ್ರತಿಪಾದಿಸುತ್ತದೆ.
- ಅನುಚ್ಚೇದ-42, ಇದು ಮಹಿಳಾ ಉದ್ಯೋಗಿಗಳಿಗೆ ಬಾಣಂತಿ ಸವಲತ್ತು ಒದಗಿಸುವುದು, ಉದ್ಯೋಗ ಸ್ಥಳದಲ್ಲಿ ನ್ಯಾಯಯುತ, ಮಾನವೀಯ ಪರಿಸರ ಇರುವಂತೆ ನೋಡಿಕೊಳ್ಳುವುದಾಗಿ ನಿಯಮ ರೂಪಿಸಿದೆ.
- ಅನುಚ್ಚೇದ-243, ಇದರ ಅಡಿಯಲ್ಲಿ ಮಹಿಳೆಯರ ರಾಜಕೀಯ ಮೀಸಲಾತಿಯನ್ನು ಕುರಿತಂತೆ ಕಾನೂನು ರೂಪಿಸಲಾಗಿದೆ. ಹಾಗೆಯೇ ಮಹಿಳೆಯರ ಸ್ವಾಭಿಮಾನದ ಬದುಕಿಗೆ ಪೂರಕವಾದ ಹಲವಾರು ಕಾನೂನುಗಳು ಕೂಡ ಸಂವಿಧಾನಾತ್ಮಕವಾಗಿ ರೂಪಿಸಲ್ಪಟ್ಟಿವೆ.
ಬಾಬಾಸಾಹೇಬ್ ಅಂಬೇಡ್ಕರ್ ಅವರ ಪರಿಶ್ರಮದ ಫಲವಾಗಿ ಮೂಡಿದ ಸಂವಿಧಾನದ ಅಡಿಯಲ್ಲಿ ಶತಮಾನಗಳ ಕಾಲ ಸ್ವಾಭಿಮಾನ ಮತ್ತು ಸ್ವಾತಂತ್ಯದಿಂದ ವಂಚಿತವಾಗಿದ್ದ ಸ್ತ್ರೀ ಸಮೂಹಕ್ಕೆ ವಿಮೋಚನೆ ಲಭಿಸಿತು. ಆದರೆ ಈ ಸಮಾನತೆಯನ್ನು ಸಹಿಸದ ಮನುವಾದಿ ಮನಸ್ಸುಗಳು ನಿರಂತರವಾಗಿ ಅಸಮಾನತೆಯನ್ನು ಎತ್ತಿಹಿಡಿಯುವ ಮನುವಾದವನ್ನು ಮತ್ತೇ ಪ್ರತಿಪಾದಿಸಲು ಹೆಣಗಾಡುತ್ತಿವೆ.
ಲಿಂಗ ತಾರತಮ್ಯದ ಪ್ರತೀಕವಾಗಿದ್ದ ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಪ್ರವೇಶಕ್ಕೆ ಸುಪ್ರಿಂಕೋರ್ಟ್ ಮೊರೆ ಹೋಗಿ ನ್ಯಾಯ ಪಡೆದುಕೊಂಡಾಗಲೂ ಭಾರತೀಯ ಸನತನವಾದಿಗಳು ಸಂವಿಧಾನ ವಿರೋಧಿ ಚಟುವಟಿಕೆಗಳ ಮೂಲಕ ಲಿಂಗ ತಾರತಮ್ಯವನ್ನು ಮೆರೆಯುತ್ತಿದ್ದಾರೆ. ಧರ್ಮದ ಹೆಸರಿನಲ್ಲಿ ಮಾನವೀಯ ಮೌಲ್ಯಗಳನ್ನು ಕಡೆಗಣಿಸುತ್ತಿದ್ದಾರೆ.
ಶಬರಿಮಲೆಗೆ ಹೋಗಬಾರದೆಂದು ಯಾವ ಶಾಸ್ತ್ರ ವಿಧಿಸದಿದ್ದರೂ ಸನಾತವಾದಿಗಳು ದೇವಸ್ಥಾನದ ಬಾಗಿಲ ಬಳಿ ಮಾರಕಾಸ್ತ್ರಗಳನ್ನು ಹಿಡಿದು ತಮ್ಮ ಪುಂಡಾಟಿಕೆಯನ್ನು ಮೆರೆದಿದ್ದಾರೆ. ಸ್ವಾಭಿಮಾನದಿಂದ ಪೋಲಿಸರ ರಕ್ಷಣೆಯೊಂದಿಗೆ ದೇವಸ್ಥಾನ ಪ್ರವೇಶ ಮಾಡಿದ ಮಹಿಳೆಯರ ಮೇಲೆ ಹಲ್ಲೆ ಮತ್ತು ದೌರ್ಜನ್ಯಗಳನ್ನು ನಡೆಸಿದ್ದಾರೆ. ಸ್ವತಃ ಮಹಿಳೆಯರೇ ನಾವು ಹೋಗುವುದು ಬೇಡವೆಂದು ತಮ್ಮನ್ನು ತುಳಿಯುತ್ತಿರುವ ಮೌಢ್ಯತೆಯ ರಕ್ಷಕರಾಗಿ ನಿಂತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
~ ಯೋಗೇಶ್ ಮಾಸ್ಟರ್
ಮೆಟ್ಟಿಲುಗಳ ಮೇಲೆ ನಿಂತು ದಿಟ್ಟಿಸುತ್ತಿರುವವನ ನೋಡುಗರು ಏನೆಂದು ತಿಳಿದಾರು? ಹತ್ತುತ್ತಿರುವನೆಂದೋ, ಇಳಿಯುತ್ತಿರುವನೆಂದೋ? ಯಾರೇನಾದರೂ ಅಂದುಕೊಳ್ಳಲಿ ಹೊರಗೆ ಹತ್ತುತ್ತಿರುವವನು ಇಳಿಯುತ್ತಿರಬಹುದು. ಇಳಿಯುತ್ತಿರುವವನು ಹತ್ತುತ್ತಿರಬಹುದು.
ಈಗ ಯಾರೂ ನೋಡುತ್ತಿಲ್ಲ. ನಾನು ಹತ್ತುತ್ತಿರುವೆನೋ ಇಳಿಯುತ್ತಿರುವೆನೋ ಯಾರೂ ನೋಡುತ್ತಿಲ್ಲ. ಯಾರೊಬ್ಬರೂ ಇಲ್ಲದಿರುವಾಗಲೂ ನಾನು ನನಗೆ ಪ್ರಾಮಾಣಿಕವಾಗಿ ಇರದಿದ್ದರೆ? ‘ಆತ್ಮಾರಾಮ್, ಈಗೇನು ನೀನು ಏರುತ್ತೀಯೋ, ಇಳಿಯುತ್ತೀಯೋ?’ ಬೇರೊಬ್ಬರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿಬಿಡಬಹುದು. ನಾನೇ ಹಾಕಿಕೊಳ್ಳುವ ಪ್ರಶ್ನೆಗೆ ನಾನೇ ಉತ್ತರಿಸುವ ಧೈರ್ಯ ಅಷ್ಟು ಸುಲಭದಲ್ಲಿ ಬರುವುದಿಲ್ಲ.
ನೂರಾರು ಆಪ್ತ ಸಮಾಲೋಚನೆಗಳಲ್ಲಿ ಸಾವಿರಾರು ಪ್ರೊಜೆಕ್ಟಿವ್ ಪ್ರಶ್ನೆಗಳನ್ನು ಕೇಳಿದ್ದೇನೆ. ನನಗೆ ನಾನೇ ಪ್ರೊಜೆಕ್ಟ್ ಮಾಡುವ ಪ್ರಶ್ನೆಯನ್ನು ನಾನು ಹಾಕಿಕೊಳ್ಳಲು ಇದುವರೆಗೂ ಆಗಿಲ್ಲ.
ಇವತ್ತು ಹಾಕಿಕೊಂಡೆ. ಅದ್ಯಾಕೋ ಮೆಟ್ಟಿಲುಗಳು ನನ್ನ ಪ್ರಶ್ನಿಸಿದವು. ಹೇ ಆತ್ಮಾರಾಮ್, ಈಗೇನು? ನೀನು ಏರುತ್ತೀಯೋ? ಇಳಿಯುತ್ತೀಯೋ?’ ಏರಿದ್ದೇನೆಂದುಕೊAಡು ಇಳಿದಿರುವ ನಾನು ಹೇಗೆ ಉತ್ತರಿಸಲಿ? ಮೆಲ್ಲನೆ ಕುಳಿತುಬಿಟ್ಟೆ.
ಹೌದು, ಈ ಮೆಟ್ಟಿಲುಗಳು ಬರೀ ಏರಲಲ್ಲ, ಇಳಿಯಲೂ ಅಲ್ಲ. ಕುಳಿತುಕೊಳ್ಳಲೂ ಹೌದು.
ಒಳಗಿರುವ ಮಾತುಗಳು ಹೊರಗೆಡವಲೂ ಅಲ್ಲ, ಒಳಗೆ ನುಂಗಿಕೊಳ್ಳಲೂ ಅಲ್ಲ. ಆದರೆ ಅವು ಬಹುಕಾಲದಿಂದ ಕಾಯುತ್ತಲೇ ಇವೆ. ಕಾದು ಕಾದು ಬಿಸಿಯೇರಿದೆ. ಈಗ ಹೊರಗೆಡಬೇಕು ಅಥವಾ ನುಂಗಬೇಕು. ಹಾಗೆಯೇ ತಣ್ಣಗಾಗುವ ಬಗೆಯೇನಾದರೂ ಇದೆಯಾ?
ನೋಡುಗರ ಕಣ್ಣಲ್ಲಿ ನಾನೊಂದು ಪರಮ ಶಾಂತಿ. ಆದರೆ ಅದು ನನ್ನೊಳಗೆ ಬರೀ ಭ್ರಾಂತಿ. ಒಳಗೆ ಪದೇ ಪದೇ ಪ್ರತಿಧ್ವನಿಸುತ್ತಿರುವ ಸದ್ದುಗಳ ಸೊಲ್ಲಡಗಿಸಿ ಸುಮ್ಮನಿರಿಸಲು ಹೇಗಾದೀತು? ಆಪ್ತ ಸಮಾಲೋಚನೆಗೆ ಬಂದವರು ಇದನ್ನು ಹೇಳಿದರೆ, “ಪದೇ ಪದೇ ಆಲೋಚನೆಗಳು ಬರುತ್ತಿದ್ದರೆ ಅದನ್ನು ಚಿಂತಾಚಕ್ರ ಅಥವಾ ಡಿumiಟಿಚಿಣioಟಿ ಎನ್ನುತ್ತೇವೆ. ಅದರಿಂದ ನೀವು ಹೊರಗೆ ಬರಬೇಕು” ಎಂದು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟು ಕಳುಹಿಸುತ್ತಿದ್ದೆ. ಆದರೆ ನನಗೆ ನಾನು ಎಂತದ್ದೋ ಒಂದಷ್ಟು ಸಲಹೆ ಸೂಚನೆಗಳನ್ನು ಕೊಟ್ಟುಕೊಳ್ಳಲು ಆಗದು.
ಸದ್ದಿಲ್ಲದ ಹಗಲಲ್ಲಿ, ಸದ್ದಡಗಿದಾಗ ರಾತ್ರಿಯಲ್ಲಿ ಹಳೆಯ ಮಾತುಕತೆಗಳು, ತಪುö್ಪಗಳು, ಬೇಸರಗಳು, ಪಶ್ಚಾತ್ತಾಪಗಳು ಮತ್ತು ವೈಫಲ್ಯಗಳು ಹಿಂದೆ ಹಿಂದೆಯೇ ಕಡಲ ತಡಿಗೆ ಬಂದಪ್ಪಳಿಸುವ ತಡೆಯಲಾಗದ ಅಲೆಗಳಾಗಿರುತ್ತವೆ. ಬೆಳಗಾದಾಗ ಗತ್ಯಂತರವಿಲ್ಲದೇ ಮಾಡುವ ಗದ್ದಲದಲ್ಲಿ ರಾತ್ರಿಗಾಗಿ ಕಾಯುತ್ತಾ ಒಳಗವಿತಿರುವ ಹೆಗ್ಗಣಗಳಂತೆ, ಜಿರಳೆಗಳಂತೆ ಅದೆಲ್ಲೋ ಬಿದ್ದಿರುತ್ತವೆ. ರಾತ್ರಿಯಾದರೆ ಸಾಕು ಮೆದುಳೆಂಬ ಒಡಕಲು ಪ್ರೊಜೆಕ್ಟರ್ ತನ್ನ ಮಾಸಲು ಸಿನಿಮಾವನ್ನು ತಂತಾನೆ ತೋರಿಸಲಾರಂಭಿಸುತ್ತವೆ.
ಅವರಿಗೆ ಇವರಿಗೆ ನಾನು ಹೇಳುವುದು ಅದೆಷ್ಟು ಕಪಟತನದ್ದು!
‘ಇದು trap of overthinking. ನೀವು ಹೊರಗೆ ಬರಬೇಕು.’
ನನಗೇ ಅವನ್ನು ನೋಡಿಕೊಳ್ಳಲು ಆಗಿಲ್ಲ. ನೋಡಿಕೊಳ್ಳಲು ಆಗಿಲ್ಲ ಎನ್ನುವುದಕ್ಕಿಂತ ನೋಡಿಕೊಳ್ಳಲು ಭಯ. ನನಗೆ ನನ್ನ ಮೇಲೆಯೇ ಜಿಗುಪ್ಸೆ ಬಂದುಬಿಟ್ಟೀತೆAಬ ಭಯ. ಆದರೆ ನೋಡಿಕೊಂಡರೆ ಬಾಧೆ ನಿವಾರಣೆಯಾಗಬಹುದು. ಚಿಂತಾಚಕ್ರ ತಿರುಗುತ್ತಿದ್ದಂತೆ, ಬಹುಕಾಲ ತಿರುಗುತ್ತಲೇ ಇದ್ದಂತೆ ಸವೆಯುವುದು. ಆ ಸವಕಳಿ ಚಿಂತಾಚಕ್ರವನ್ನು ಇಲ್ಲವಾಗಿಸದು. ಆದರೆ ಅದು ಸುತ್ತಲು ಮಧ್ಯದ ಕೀಲಾಗಿರುವ ನನ್ನ ಬಳಲಿಸುವುದು.
ಆ ಬಳಲಿಕೆಯೇ ನನ್ನ ವಯಸ್ಸಿಗಿಂತ ಹೆಚ್ಚು ಆಯಸ್ಸಾದಂತೆ ಕಾಣಿಸುವುದು. ಇರುವುದಕ್ಕಿಂತ ದೇಹ ಭಾರವಾಗಿರುವುದು.
ಹೌದಲ್ಲಾ, ಏರುತ್ತಲೋ, ಇಳಿಯುತ್ತಲೋ ಹೆಣಗಾಡುವ ಬದಲು ಕುಳಿತಾದ ಅಂದೆತದ್ದೋ ಪ್ರಶಾಂತತೆ ಒದಗಿದೆ ಇಂದು! ನನಗೆ ನಾನೇ ಹಳೆಯ ಸ್ನೇಹಿತನಾಗಿ ಕುಳಿತುಕೊಂಡು ನನ್ನದೇ ಮಾತುಗಳಿಗೆ ನಾನೇ ಕಿವಿಯಾಗುವ ಸರತಿ ಇಂದು ಒದಗಿತೇ?
ನನಗೆ ನಾನೇ ಹೇಳಿಕೊಳ್ಳುವುದು ಪರಕೀಯವೆನ್ನಿಸಿದರೂ ಒಂದಿಷ್ಟು ಉಸಿರಾಡಲು ಸರಾಗವೆನಿಸಿದೆ. ಕೈ ಮುಷ್ಟಿಗಟ್ಟಿದರೂ ಒಳಗೇ ಸಡಿಲವಾಯಿತು. ಮಡಿಸಿದ ಮೊಣಕೈ ತೊಡೆಯ ಮೇಲೆ ಒತ್ತುವುದನ್ನು ನಿಲ್ಲಿಸಿ ಹಗುರವಾಗಿ ಹತ್ತಿಯಂತೆ ಊರಿತು. ಮಧ್ಯಾಹ್ನದಲ್ಲೂ ತಂಗಾಳಿಯು ಮುಖಕ್ಕೆ ಮುತ್ತಿಡತೊಡಗಿತು.
ನಾಳೆ ಈ ಚಿಂತಾಚಕ್ರ ಮತ್ತೆ ತಿರುಗಣಿಯಾಗಬಹುದೇನೋ. ಆದರೆ ಚಿಂತೆಗಳ ನಡುನಡುವೆ ಒಂದಿಷ್ಟು ಉಸಿರುತೆಗೆದುಕೊಳ್ಳಲು ಸಾಧ್ಯವಾಗಿದ್ದು, ಏರುವುದನ್ನು, ಇಳಿಯುವುದನ್ನು ಬಿಟ್ಟು ಈ ಮೆಟ್ಟಿಲುಗಳ ಮೇಲೆ ಕೂತಿದ್ದಕ್ಕೆ.
‘ಹೌದು ಕಣೋ ಆತ್ಮಾ, ಹೌದು!’

ಅಂತರಂಗ
ಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ
~ಯೋಗೇಶ್ ಮಾಸ್ಟರ್, ಚಿಂತಕರು
ಆಪ್ತ ಸಮಾಲೋಚಕ ಮತ್ತು ಮನೋವೈದ್ಯ
ಹಾಗಂತಿರುವ ನನ್ನ ಮನೆಯ ಮುಂದಿನ ನನ್ನ ಪರಿಚಯ. ಅದನ್ನೇ ನಾನೆಂದು ತಿಳಿದಿರುವ ಹೊರಗಿನವರಿಗೆಲ್ಲಾ ನನ್ನೊಳಗಿರುವ ಅಪರಿಚಿತನ ಹೇಗೂ ಕಾಣಲಾಗದು.
ಲೋಕ ಕಾಣುವ ಅಥವಾ ನಾನು ತೋರುವ ಮುಖದ ಮುಸುಕನ್ನು ಸರಿಸಿ ಇಣುಕುವಷ್ಟು ಯಾರಿಗಾದರೂ ಅದೆಷ್ಟು ಬಿಡುವಿರುವುದು! ಪರದೆಯ ಮೇಲಿನ ಡಾ. ಆತ್ಮಾರಾಮನ ನೆರಳಿನಾಟವನ್ನು ಮೆಚ್ಚುವರು, ಹೊಗಳುವರು, ತೆಗಳುವರು, ತಿರಸ್ಕರಿಸುವರು; ಅವರವರ ಕಣ್ಣುಗಳ ಅಭಿರುಚಿಗೆ ತಕ್ಕಂತೆ.
ಪರರ ರುಚಿಗೆ ಎಟಕುವುದು ಚಹರೆಗಳೇ ತಾನೇ! ಅವರ ಕಣ್ಣುಗಳಿಂದಲೇ ನನ್ನ ನಾನು ಕಂಡುಕೊಳ್ಳಲು ಅಥವಾ ಕಾಣಿಸಿಕೊಳ್ಳಲು ಸಾಕಾಗಿ ನನ್ನ ಕಣ್ಣುಗಳು ಮುಚ್ಚಿಕೊಂಡವು. ಅದೆಷ್ಟೋ ಹೊತ್ತು ಹಾಗಿದ್ದೆನೋ!
ಚಹರೆಗಳ ನೆರಳುಗಳನ್ನು ನುಂಗಿಕೊAಡ ಕಣ್ಣೊಳಗಿನ ಕತ್ತಲೆಯಲ್ಲಿ ಬೆತ್ತಲೆಯಾಗಿರುವುದು ಸುಖ. ಅದು ನಿರಾಳತೆಯ ಸುಖ. ತರಾವರಿ ತೊಡುಗೆಗಳ ತೂಕವನಿಳಿಸಿಕೊಂಡ ನಿರಾತಂಕದ ನೆಮ್ಮದಿ. ಕತ್ತಲು; ಅದೆಷ್ಟು ಆಳ! ಗೂಢತೆಗಳ ಮೇಳವದೆಷ್ಟಿದ್ದರೂ ತೋರ್ಪಡಿಸಿಕೊಳ್ಳುವ ಕಾತುರವಿಲ್ಲದ ನಿರಹಂಕಾರದ ನಿರಾಳತೆ!
ಬೆಳಕಿನದೇ ಸಮಸ್ಯೆ. ಅದರಲ್ಲದೆಷ್ಟು ಬಣ್ಣಗಳು, ಬಣ್ಣನೆಗಳು. ವ್ಯತ್ಯಾಸಗಳು, ವ್ಯತ್ಯಯಗಳು. ಸಮೀಕರಣಗಳು, ಅಸಮಾನತೆಗಳು. ಉಪಮೆಗಳು, ಉದಾಹರಣೆಗಳು. ಸಾಧಾರಣಗಳು, ಅಸಾಧರಣಗಳು. ಅಸೂಯೆಗಳು, ಆಯಾಸಗಳು. ಕತ್ತಲು ನೆಮ್ಮದಿ. ಮುಚ್ಚಿರುವ ಕಣ್ಣೊಳಗಿನ ಕತ್ತಲಿನಲ್ಲಿ ಕಾಣತೊಡಗಿದ ನನ್ನ ಬಿಂಬವನ್ನು ನೋಡುತ್ತಲೇ ಕುಳಿತುಬಿಟ್ಟೆ. ಹೌದಲ್ಲಾ, ಇಷ್ಟು ಕಾಲ ಮುಚ್ಚಿಟ್ಟಿದವರೇ ಈಗ ಬಿಚ್ಚಿಡುತ್ತಿದ್ದಾರೆ.
ಹೌದು, ಮನಸ್ಸೆಂಬುದೇ ಹಾಗೆ. ಅದು ತನಗೆ ತಾನೇ ತೊಂದರೆಯನ್ನು ಉಂಟುಮಾಡಿಕೊಳ್ಳುತ್ತದೆ. ತಾನೇ ಗೋಗರೆಯುತ್ತದೆ. ತಾನೇ ಸಹಾಯವನ್ನು ನಿರಾಕರಿಸುತ್ತದೆ. ತಾನೇ ಗೋಳಿಡುತ್ತದೆ. ತಾನೇ ಸಂತೈಸುತ್ತದೆ.
ತಿಕ್ಕಲು, ತಾನೇ ಹಾಳು ಮಾಡುವುದು, ತಾನೇ ಗೋಳಿಡುವುದು, ತಾನೇ ಸರಿ ಮಾಡುವುದು. ಈಗ ಸರಿಮಾಡಿಕೊಳ್ಳುವ ಮಗ್ಗುಲಿಗೆ ತಿರುಗಿಕೊಂಡಿದೆ. ಸರಿ ಹೋಗಿಬಿಡಲಿ.
ಸರಿ ಹೋಗುವುದೋ ಬಿಡುವುದೋ, ಸರಿಯಿಲ್ಲ, ಸರಿ ಮಾಡಬೇಕಾಗಿದೆ ಅಂತ ಗೊತ್ತಾಯಿತಲ್ಲಾ ಅಷ್ಟೇ ಸಾಕು.
ರೋಗವಿದೆ ಎಂಬ ಅರಿವು ಬಹುದೊಡ್ಡ ಉಪಶಮನ. ರೋಗವನ್ನೇ ಆರೋಗ್ಯವೆಂದು ಭಾವಿಸಿದ್ದು, ಈಗ ರೋಗ ಎಂದು ತಿಳಿಯಿತಲ್ಲಾ, ಅದೇ ಗುಣಮುಖವಾಗುವ ಮುನ್ಸೂಚನೆ.
ಇಷ್ಟೂ ದಿನಗಳ ಕಾಲ ಕನ್ನಡಿಯೊಳಗೆ ಮುಖ ನೋಡಿಕೊಳ್ಳುತ್ತಿದ್ದದ್ದು, ಇತರರಿಗೆ ಹೇಗೆ ಕಾಣಿಸುತ್ತೇನೆ, ಹೇಗೆ ಕಾಣಿಸಬೇಕು ಎಂದು. ಆದರೆ ಇಂದು ಕತ್ತಲಿನ ಕನ್ನಡಿಯಲ್ಲಿ ಕಾಣುತ್ತಿರುವ ಮುಖದ ಒಳಗಿನ ಮೌನ ತನ್ನ ಗುರುತಿನ ಪರದೆಯನ್ನು ಹರಿಯುತ್ತಿದೆ. ಯಾವ ಅಡಿಗಿದ್ದ ಮೌನ ನನ್ನಾತ್ಮದ ಕವಚವಾಗಿತ್ತೋ ಅದು ಕಾರಾಗೃಹವೆನಿಸಿ ಉಸಿರುಕಟ್ಟಿಸಿದ್ದು ಒಳ್ಳೆಯದೇ ಆಯಿತು.
ಮೌನ ದನಿಯಾಗುತ್ತಿದೆ. ದನಿ ಬನಿಯಾಗುತ್ತಿದೆ.
ಹಾಗಾಗಿಯೇ ಬೆಳಕಿನಲ್ಲಿ ವಿವಿಧ ಬಣ್ಣಗಳನ್ನು ಹಚ್ಚಿ ಬಣ್ಣಿಸಿದ್ದ ಎಲ್ಲಾ ಸಂಬAಧಗಳು, ಸಂಗತಿಗಳು, ಸಂವಹನಗಳು, ಸಂಘರ್ಷಗಳು ಈಗ ನೆನಪಿನ ನೆರಳುಗಳಾಗಿ ಆಳವಾದ ಕತ್ತಲಲ್ಲಿ ಬಣ್ಣ, ಬಣ್ಣನೆಗಳನ್ನು ಕಳೆದುಕೊಂಡಿವೆ.
ಅವರಿವರ ಮನಸ್ಸುಗಳ ಮಸುಕು ಮಾಡುವ ಮುಸುಕುಗಳ ತೆಗೆಯಲು ಸಹಕರಿಸುತ್ತಿದ್ದವನಿಗೆ ಸ್ವಸಹಾಯ ಮಾಡಿಕೊಳ್ಳಲು ಅದೇ ಮನಸ್ಸು ಮನಸ್ಸು ಮಾಡಿದೆ. ಆಗಲಿ, ಅದೂ ಆಗಿ ಹೋಗಲಿ.
ಮನೋವೈದ್ಯ ತನ್ನೊಳಗಿನ ರೋಗವನ್ನು ಪತ್ತೆ ಮಾಡಿಕೊಳ್ಳಲಿ. ಆಪ್ತ ಸಮಾಲೋಚಕ ತನ್ನಿರುವಿಗೆ, ತನ್ನಾಳಕೆ ಒಂದಿಷ್ಟು ಕಾಲ ಆಪ್ತನಾಗಿರುವ ಅವಕಾಶವನ್ನು ದಕ್ಕಿಸಿಕೊಳ್ಳಲಿ. ಮೌನವನ್ನು ಓದುವ ಓರಗೆಯವರಿದ್ದಾರೆ. ಓದಲಿ.
ವೈದ್ಯನೊಬ್ಬ ತಾನು ರೋಗಿಯಾಗಿರಲಿಲ್ಲ, ಅಥವಾ ತನಗೆ ರೋಗ ಬರುವುದಿಲ್ಲ ಎನ್ನುವುದು ಆತ್ಮವಂಚನೆ. ತನಗೆ ತಾನು ವಂಚಿಸಿಕೊಳ್ಳುವವನು ಜಗತ್ತಿನ ಯಾರೊಂದಿಗೆ ವಿಶ್ವಾಸವನ್ನು ಸಂಚಯ ಮಾಡಿಯಾನು!
ಮತ್ತೆ ಸಿಕ್ಕಿದನವನು ಮೌನದಲಿ
ಕಳೆದಿದ್ದವನು ಗದ್ದಲದಲಿ
ಗಾಯಗಳು ಮರೆತಿವೆ
ನೋವಿಲ್ಲದ ಕಲೆಗಳ ಹಿಂದೆ
ಪ್ರತಿ ಉಸಿರು ಆಸೆಗಳ ಬಸಿರು
ಹೆರಲಾಗದೆ ಘನವಾದ ಕಣ್ಣೀರು
ಕರಗುವುದೊಮ್ಮೆ ಹೆಪುö್ಪಗಟ್ಟಿದ ಕಾರ್ಮೋಡ
ಸುರಿವುದಲ್ಲಿ ಒಳಗಣ್ಣಿಂದ ಮಳೆಯು ನೋಡ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ದಿಮಾಗಿ ನಕ್ಸಲ್-ನಗರ ನಕ್ಸಲ್
~ರಹಮತ್ ತರೀಕೆರೆ, ಚಿಂತಕರು
ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.
ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.
ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.
ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.
ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.
ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.
ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.
ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.
ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ6 days agoದಿಮಾಗಿ ನಕ್ಸಲ್-ನಗರ ನಕ್ಸಲ್
-
ದಿನದ ಸುದ್ದಿ6 days agoಶಿಕ್ಷಣ ಸಂಸ್ಥೆಗಳು ವೈಚಾರಿಕತೆ ; ವೈಜ್ಞಾನಿಕತೆಯ ಬೆಳಕು ಚೆಲ್ಲುವ ದೀಪಗಳಾಗಲಿ
-
ಅಂತರಂಗ5 days agoಡಾ. ಆತ್ಮಾರಾಮನ ಆತ್ಮನಿವೇದನೆ ; ಒಳಗನ್ನಡಿಯಲ್ಲಿ ಮೌನದ ಮುಖ
-
ದಿನದ ಸುದ್ದಿ4 days agoಅಪರೂಪದ ಲಿವರ್ ಗಡ್ಡೆ | ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನಲ್ಲಿ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ
-
ದಿನದ ಸುದ್ದಿ2 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ಅಂತರಂಗ4 hours agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು

