Connect with us

ಬಹಿರಂಗ

ಜಾತ್ರೆ-ಸಂತೆಯ ಬಯಲಲಿ ಮತಾಂಧತೆಯ ಕರಾಳ ನೆರಳು

Published

on

ಸಾಂದರ್ಭಿಕ ಚಿತ್ರ

ಮಂದಿರ ಮಸೀದಿ ಶಾಲೆಗಳನ್ನು ದಾಟಿ ಮತಾಂಧತೆ ಜನದಟ್ಟಣೆಯ ಸಂತೆಕಟ್ಟೆಗೆ ಬಂದು ನಿಂತಿದೆ

  • ನಾ ದಿವಾಕರ

ಕೋಮುವಾದದ ಕ್ಯಾನ್ವಾಸ್ ದೊಡ್ಡದು. ಈ ಜನವಿರೋಧಿ ಮನಸ್ಥಿತಿಯನ್ನು ಸಮಾಜದ ಅಂತರಂಗದಲ್ಲೇ ಸೃಷ್ಟಿಸುವ ಮತೀಯವಾದ ಮತ್ತು ಮತಾಂಧತೆಯ ಬೇರುಗಳು ಆಳಕ್ಕಿಳಿದಷ್ಟೂ ಮನುಜ ಸಮಾಜವನ್ನು ದ್ವೇಷದ ಬೃಹತ್ ವೃಕ್ಷಗಳು ಆವರಿಸುತ್ತಲೇ ಹೋಗುತ್ತವೆ.

ಜನಸಾಮಾನ್ಯರ ನಿತ್ಯ ಜೀವನದಲ್ಲಿ ಕನಿಷ್ಠ ಮಟ್ಟದ ಗಮನ ಸೆಳೆಯಬೇಕಾದ ಜಾತಿ, ಮತ, ಧರ್ಮದ ಆಚರಣೆಗಳು, ಸಮಾಜ ನಿರ್ಮಾಣದ ಮುಖ್ಯ ಭೂಮಿಕೆಯಾಗಿ ಪರಿವರ್ತನೆಯಾದಾಗ ಈ ಅಸ್ಮಿತೆಗಳ ಬೇರುಗಳು ಜನರ ಮನಸ್ಥಿತಿಯನ್ನೂ ಸಂಕುಚಿತಗೊಳಿಸುತ್ತಲೇ ಹೋಗುತ್ತದೆ. ಹೀಗೆ ಸಂಕುಚಿತಗೊಂಡ ಮನಸುಗಳೇ ಮತೀಯ ಶಕ್ತಿಗಳು ಬಿತ್ತುವ ದ್ವೇಷದ ಬೀಜಗಳಿಗೆ ಫಲವತ್ತಾದ ಭೂಮಿಕೆಯಾಗುತ್ತವೆ.

ತಮ್ಮ ಬದುಕು, ಬವಣೆ, ಸಂಕಷ್ಟಗಳೆಲ್ಲಕ್ಕೂ ಇಡೀ ಸಮಾಜವನ್ನು ನಿಯಂತ್ರಿಸುವ ಒಂದು ಕ್ರೂರ ಅರ್ಥವ್ಯವಸ್ಥೆ ಮತ್ತು ಈ ಕ್ರೌರ್ಯವನ್ನು ಸಮರ್ಥಿಸಿಕೊಂಡೇ ತನ್ನ ಸಾಮ್ರಾಜ್ಯವನ್ನು ವಿಸ್ತರಿಸುವಂತಹ ಮತ ಧರ್ಮಗಳ ಸಾಂಸ್ಥಿಕ ನೆಲೆಗಳು ಮೂಲ ಕಾರಣ ಎಂಬ ಸುಡುವಾಸ್ತವವನ್ನು ಜನರು ಅರ್ಥಮಾಡಿಕೊಳ್ಳದ ಹೊರತು ಈ ದ್ವೇಷ ಬೀಜಗಳಿಂದ

ಮೊಳಕೆಯೊಡೆಯುವ ಸಸಿಗಳನ್ನು ಕಿತ್ತೊಗೆಯಲಾಗುವುದಿಲ್ಲ. ಭಾರತದಲ್ಲಿ ಕೋಮುವಾದ ಮತ್ತು ಮತೀಯ ದ್ವೇಷದ ಬೀಜಗಳಿಗೆ ಶತಮಾನದಷ್ಟು ಇತಿಹಾಸವಿದೆ. ಹಿಂದೂ-ಮುಸ್ಲಿಂ ಸಮೀಕರಣವನ್ನು ಬದಿಗಿಟ್ಟು ನೋಡಿದಾಗಲೂ, ಈ ದೇಶದ ಇತಿಹಾಸದಲ್ಲಿ ಒಂದು ಇಡೀ ಜನಾಂಗ. ಅಸ್ಪೃತೆಯಂತಹ ಹೀನ ಆಚರಣೆಯಿಂದ ಇಂದಿಗೂ ಅಗೋಚರವಾಗಿ ಬಹಿಷ್ಕೃತವಾಗಿಯೇ ಬದುಕುತ್ತಿದೆ.

ಜನಸಮುದಾಯಗಳ ಮೇಲೆ ತನ್ನದೇ ಆದ ವಾರಸುದಾರಿಕೆ ಮತ್ತು ಹಕ್ಕೊತ್ತಾಯಗಳನ್ನು ಹೇರುತ್ತಾ, ಉತ್ತರದಾಯಿತ್ವ ಇಲ್ಲದ ಒಂದು ಶೋಷಕ ವ್ಯವಸ್ಥೆಯನ್ನು ಹೇರುವ ಮೂಲಕ ಭಾರತದ ವೈದಿಕಶಾಹಿ ಪರಂಪರೆಯು ಜಾತಿ ವ್ಯವಸ್ಥೆಯಂತಹ ಒಂದು ಕ್ರೂರ ಪೆಡಂಭೂತವನ್ನು ಸೃಷ್ಟಿಸಿದೆ.

ಮನುಷ್ಯನ ಹುಟ್ಟಿನ ಮೂಲದಿಂದಲೇ ಸೃಷ್ಟಿಸಲಾಗುವ ಕಂದರಗಳು ಅಂತಿಮ ಪಯಣದವರೆಗೂ ಮುಂದುವರೆಯುವಂತಹ ಒಂದು ವಿಕೃತ ವ್ಯವಸ್ಥೆಗೆ ಭಾರತೀಯರಾದ ನಾವು ಒಗ್ಗಿಹೋಗಿದ್ದೇವೆ. ತಮ್ಮ ಪಯಣ ಮುಗಿಸಿ ಇಹಲೋಕ ತ್ಯಜಿಸಿದ ನಂತರವೂ ತುಳಿತಕ್ಕೊಳಗಾದ, ಬಹಿಷ್ಕೃತ ಸಮುದಾಯದ ಜೀವಗಳು ಪತ್ಯೇಕತೆಯ ಶಿಕ್ಷೆಯನ್ನು ಅನುಭವಿಸಬೇಕಾದ ಒಂದು ದುರಂತ ಸನ್ನಿವೇಶವನ್ನು ಇಂದಿಗೂ ಭಾರತ ಎದುರಿಸುತ್ತಿದೆ.

ಸಾಮಾಜಿಕ ಬದುಕಿನ ಮತ್ತು ಸಾಂಸ್ಕೃತಿಕ ಹೆಜ್ಜೆಗಳ ಪ್ರತಿ ಹಂತದಲ್ಲೂ ಅನ್ಯರನ್ನು ಸೃಷ್ಟಿಸುತ್ತಾ ‘ ನಮ್ಮವರೆಂಬ ’ ಭದ್ರಕೋಟೆಗಳನ್ನು ನಿರ್ಮಿಸುವ ಒಂದು ಕ್ರೂರ ಜಾತಿ ವ್ಯವಸ್ಥೆ ಅತಿಮಾನುಷ ಶಕ್ತಿಗಳನ್ನು ಆರಾಧಿಸುತ್ತಲೇ ಸಮಾಜದ ಗರ್ಭದಲ್ಲಿ ಅಮಾನುಷತೆಯ ಬೀಜಗಳನ್ನು ಬಿತ್ತುತ್ತಾ ಬಂದಿದೆ.

ಈ ಭದ್ರಕೋಟೆಗಳೊಳಗೆ ತಮ್ಮದೇ ಆದ ಹಿತವಲಯವನ್ನು ಸೃಷ್ಟಿಸಿಕೊಳ್ಳುವ ಪ್ರತಿಯೊಂದು ಜಾತಿ ಸಮುದಾಯವೂ ಅನ್ಯ ಜಾತಿಯನ್ನು ಕೀಳೆಂದು ಭಾವಿಸುತ್ತಾ ಶೋಷಣೆಗೊಳಪಡಿಸುವುದು ಇಲ್ಲಿನ ಜಾತಿ ವ್ಯವಸ್ಥೆಯ ವೈಶಿಷ್ಟ್ಯ. ಭಾರತೀಯ ಸಮಾಜದಲ್ಲಿ ಶತಮಾನಗಳಿಂದ ತಮ್ಮ ಅಸ್ತಿತ್ವ ಕಂಡುಕೊಂಡಿರುವ ಜನಸಮುದಾಯಗಳು ತಮ್ಮ ಮತಶ್ರದ್ಧೆ ಮತ್ತು ಧಾರ್ಮಿಕ ಆಚರಣೆಗಳ ಕಾರಣಕ್ಕಾಗಿಯೇ ಈ ‘ ಅನ್ಯವರ್ಗ’ಕ್ಕೆ ಸೇರಿಬಿಡುತ್ತವೆ.

ಜಾತಿ ವ್ಯವಸ್ಥೆಯ ದೌರ್ಜನ್ಯಗಳಿಗೆ, ಅಸ್ಪೃಶ್ಯತೆಯಂತಹ ಅಮಾನುಷ ಹೀನ ಪದ್ಧತಿಗೆ ಕುರುಡಾಗಿರುವ ಸಮಾಜದಲ್ಲಿ ಈ ‘ ಅನ್ಯವರ್ಗ’ವನ್ನು ಸೃಷ್ಟಿಸುವುದು ಬಹಳ ಸುಲಭ ಎನ್ನುವುದನ್ನು ಈ ದೇಶದ ಸಾಂಸ್ಕೃತಿಕ ರಾಷ್ಟ್ರೀಯತೆಯ ರಾಜಕಾರಣ ನಿರೂಪಿಸಿದೆ.

ಇಡೀ ಸಮಾಜವನ್ನು ತನ್ನ ಬೌದ್ಧಿಕ ಆಧಿಪತ್ಯಕ್ಕೊಳಪಡಿಸುವ ಮೂಲಕ ಸಾಂಸ್ಕೃತಿಕ ನೆಲೆಯಲ್ಲಿ, ಸಾಮಾಜಿಕಾರ್ಥಿಕ ನೆಲೆಯಲ್ಲಿ ಪಾರಮ್ಯ ಸಾಧಿಸಲೆತ್ನಿಸುವ ಬಹುಸಂಖ್ಯಾವಾದದ ರಾಜಕೀಯ ಶಕ್ತಿಗಳು ಇಂದು ಈ ದೇಶದ ದಲಿತರನ್ನೂ, ಅಲ್ಪಸಂಖ್ಯಾತರನ್ನೂ, ಮಹಿಳೆಯರನ್ನೂ ಮತ್ತು ಅವಕಾಶವಂಚಿತ ಜನಸಮುದಾಯಗಳನ್ನೂ ಅಸ್ಮಿತೆಗಳ ಚೌಕಟ್ಟಿನಲ್ಲಿ ಬಂಧಿಸುವ ಪ್ರಯತ್ನ ಮಾಡುತ್ತಿವೆ.

ಈ ರಾಜಕೀಯ ಶಕ್ತಿಗಳನ್ನು ಹಿಂದುತ್ವ ರಾಜಕಾರಣ ಪ್ರಧಾನವಾಗಿ ಪ್ರತಿನಿಧಿಸುತ್ತದೆ. ಆದರೆ ಹಿಂದುತ್ವವನ್ನು ತಾತ್ವಿಕವಾಗಿ ಒಪ್ಪದ ರಾಜಕೀಯ ಶಕ್ತಿಗಳೂ ಸಹ ತಮ್ಮ ಸ್ಪಷ್ಟ ಧೋರಣೆಯನ್ನು ವ್ಯಕ್ತಪಡಿಸದೆ ಇರುವುದು ವಾಸ್ತವ.

ಈ ದ್ವೇಷ ರಾಜಕಾರಣದ ಒಂದು ಆಯಾಮವನ್ನು ಮುಸ್ಲಿಂ ಹೆಣ್ಣು ಮಕ್ಕಳ ಶಿಕ್ಷಣಕ್ಕೇ ಮಾರಕವಾಗುವಂತಹ ಹಿಜಾಬ್ ವಿವಾದದಲ್ಲಿ ಕಂಡಿದ್ದೇವೆ. ಸಾಂವಿಧಾನಿಕ ಹಕ್ಕು, ಧಾರ್ಮಿಕ ಸ್ವಾತಂತ್ರ್ಯ ಮತ್ತು ಶಿಕ್ಷಣದ ಹಕ್ಕು ಮತ್ತು ಆದ್ಯತೆ, ಈ ಮೂರು ವಿಚಾರಗಳಲ್ಲಿ ಶಿಕ್ಷಣದ ಹಕ್ಕುಗಳಿಗಿಂತಲೂ ಧಾರ್ಮಿಕ ಸ್ವಾತಂತ್ರ್ಯವೇ ಪ್ರಧಾನವಾಗುವಂತಹ ಒಂದು ಭಾವನಾತ್ಮಕ ಸನ್ನಿವೇಶವನ್ನು ಸೃಷ್ಟಿಸಲಾಗಿದೆ.

ಶಾಲಾ ವ್ಯಾಸಂಗ ಮಾಡುವ ಎಳೆ ವಯಸ್ಸಿನ ಹೆಣ್ಣು ಮಕ್ಕಳು ಇಂದು ಮತೀಯವಾದದ ರಾಜಕೀಯ ಮೇಲಾಟಗಳಿಗೆ ಬಲಿಯಾಗುತ್ತಿರುವುದನ್ನು ಕಂಡೂ ಕಾಣದಂತಿದ್ದೇವೆ. ಸಮಾಜದಲ್ಲಿ ಢಾಳಾಗಿ ಕಾಣುತ್ತಿರುವ ಈ ಅಸೂಕ್ಷ್ಮತೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಪ್ರಜಾಸತ್ತಾತ್ಮಕ ಧ್ವನಿಗಳು ಸದ್ದು ಮಾಡಬೇಕಿದೆ. ಆದರೆ ಮತಶ್ರದ್ಧೆ ಮತ್ತು ಧಾರ್ಮಿಕ ನಂಬಿಕೆಗಳೇ ಪ್ರಧಾನವಾಗಿ ಸದ್ದುಮಾಡುತ್ತಿದೆ.

ಈ ಸಂದರ್ಭದಲ್ಲೇ ಕೆಲವು ಹಿಂದೂ ಮೂಲಭೂತವಾದಿ ಸಂಘಟನೆಗಳು ಮುಸ್ಲಿಂ ಸಮುದಾಯದ ಆರ್ಥಿಕ ಬೆನ್ನೆಲುಬನ್ನು ಮುರಿಯುವ ಪ್ರಯತ್ನದಲ್ಲಿ ತೊಡಗಿವೆ. ಶಾಲಾವಲಯದಲ್ಲಿ ಸೌಹಾರ್ದ ವಾತಾವರಣವನ್ನು ಕಲುಷಿತಗೊಳಿಸಿ, ಮತಾಂಧತೆಯ ಮಾಲಿನ್ಯ ಹರಡಿದ ನಂತರ ಈಗ ಮತಾಂಧರ ದೃಷ್ಟಿ ಈ ದೇಶದ ಬಹುತ್ವ ಸಂಸ್ಕೃತಿಯ ಮೂಲ ಸೆಲೆ ಎಂದೇ ಹೇಳಬಹುದಾದ ಜಾತ್ರೆಗಳ ಮೇಲೆ ಬಿದ್ದಿದೆ.

ಭಾರತದಲ್ಲಿ ಜಾತ್ರೆಗಳಿಗೆ ಒಂದು ವಿಶಿಷ್ಟ ಸ್ಥಾನ ಇದೆ. ವೈದಿಕಶಾಹಿಯಿಂದ ಮುಕ್ತವಾದ ಶೂದ್ರ ಸಮುದಾಯದ ದೇವಾನುದೇವತೆಗಳೇ ಪ್ರಧಾನವಾಗಿರುವ ಸಾವಿರಾರು ಜಾತ್ರೆ, ರಥೋತ್ಸವಗಳು ಭಾರತದಲ್ಲಿ ನಡೆಯುತ್ತಲೇ ಇರುತ್ತವೆ. ಜನಪದ ಸಂಸ್ಕೃತಿಯಿಂದ ಉಗಮಿಸಿರುವ ನೂರಾರು ದೇವತೆಗಳು ಜನಸಾಮಾನ್ಯರ, ವಿಶೇಷವಾಗಿ ದುಡಿಯುವ ಜನತೆಯ ಸಾಂತ್ವನದ ನೆಲೆಗಳಾಗಿ ಕಂಡುಬರುತ್ತವೆ.

ತಮ್ಮ ಬದುಕಿನ ಸಂಕಷ್ಟಗಳಿಗೆ ಸಾಂತ್ವನ ಹೇಳುವ ಸಾಂಸ್ಕೃತಿಕ ನೆಲೆಗಳಾಗಿ ಈ ದೈವಗಳನ್ನು ಕಾಣುವ ಪರಿಶಿಷ್ಟ ಸಮುದಾಯಗಳು ವರ್ಷಕ್ಕೊಮ್ಮೆ ನಡೆಯುವ ಜಾತ್ರೆಯಲ್ಲಿ ತಮ್ಮ ಸಾಮಾಜಿಕ-ಸಾಂಸ್ಕೃತಿಕ ಸೌಹಾರ್ದತೆಯನ್ನೂ ಸಾರುತ್ತಾ ಬಂದಿವೆ.

ಭಾರತದ ಬಹುತ್ವ ಸಂಸ್ಕೃತಿಯನ್ನು ಮತ್ತಾವ ಕ್ಷೇತ್ರದಲ್ಲಿ ಕಾಣಲಾಗದಿದ್ದರೂ, ಈ ಜಾತ್ರೆಗಳಲ್ಲಿ ಕಾಣಬಹುದು. ಜಾತಿ, ಮತ, ಧರ್ಮ, ಪಂಥ ಮತ್ತು ಭಾಷಿಕ ಅಸ್ಮಿತೆಗಳನ್ನೂ ಮರೆತು, ಸಾಮಾಜಿಕ ಅಂತಸ್ತು ಮತ್ತು ಸ್ಥಾನಮಾನಗಳನ್ನೂ ಬದಿಗೊತ್ತಿ, ಇಡೀ ಗ್ರಾಮ ಸಮುದಾಯ ಒಂದಾಗಿ ಆಚರಿಸುವ ಈ ಜಾತ್ರೆಗಳಲ್ಲಿ ಈ ದೇಶದ ಅಲ್ಪಸಂಖ್ಯಾತರೂ ಅವಿಭಾಜ್ಯ ಅಂಗವಾಗಿಯೇ ನಡೆದುಬಂದಿದ್ದಾರೆ.

ಪುರಿ ಜಗನ್ನಾಥ ದೇವಾಲಯದಿಂದ ಮೈಸೂರಿನ ಚಾಮುಂಡೇಶ್ವರಿಯವರಿಗೆ, ಕೋಲಾರದ ಕೋಲಾರಮ್ಮನಿಂದ ಕೊಲ್ಲೂರು ಮೂಕಾಂಬಿಕೆಯವರೆಗೆ ಈ ಶ್ರದ್ಧೆ ಮತ್ತು ನಂಬಿಕೆಗಳು ಸಾಮುದಾಯಿಕ, ಧಾರ್ಮಿಕ ಅಸ್ಮಿತೆಗಳ ಚೌಕಟ್ಟುಗಳನ್ನು ಭೇದಿಸಿ ಸೌಹಾರ್ದತೆಯ ದ್ಯೋತಕವಾಗಿ ಬೆಳೆದುಬಂದಿವೆ.

ಭಾರತದ ಉದ್ದಗಲಕ್ಕೂ ಕಂಡುಬರುವ ಸ್ಥಳೀಯ ನಂಬಿಕೆಗಳನ್ನಾಧರಿಸಿದ ಆಚರಣೆಗಳು ಜಾತ್ರೆಗಳ ರೂಪದಲ್ಲಿ, ಉತ್ಸವ, ರಥೋತ್ಸವದ ರೂಪದಲ್ಲಿ ಮತ್ತು ಸಾಮೂಹಿಕ ಹಬ್ಬಗಳ ರೂಪದಲ್ಲಿ ತಮ್ಮ ಅಸ್ತಿತ್ವವನ್ನು ಕಂಡುಕೊಂಡಿವೆ. ವೈದಿಕ ಪರಂಪರೆಯ ಶ್ರೇಷ್ಠತೆಯ ಅಹಮಿಕೆ, ತಾರತಮ್ಯದ ಆಚರಣೆಗಳು ಮತ್ತು ಪಾರಮ್ಯದ ಹಂಗಿಲ್ಲದೆ ಬೆಳೆದುಬಂದಿರುವ ಈ ಜನಪದೀಯ ಸಾಂಸ್ಕೃತಿಕ ನೆಲೆಗಳು ಆಧುನಿಕ ಕಾಲಘಟ್ಟದಲ್ಲೂ ತಮ್ಮ ಅಸ್ತಿತ್ವವನ್ನು ಉಳಿಸಿಕೊಂಡೇ ಬಂದಿವೆ.

ಸ್ಥಳೀಯ ಗ್ರಾಮ ದೇವತೆಗಳು, ಜನಪದೀಯ ಸಾಂಸ್ಕೃತಿಕ ವ್ಯಕ್ತಿ ಮತ್ತು ಘಟನೆಗಳು ಇಂತಹ ಜಾತ್ರೆಗಳಿಗೆ ಒಂದು ಸಾಂಸ್ಕೃತಿಕ ಸಮನ್ವಯದ ಬುನಾದಿಯನ್ನು ಒದಗಿಸುತ್ತಲೇ ಬಂದಿವೆ. ಭಾರತದ ಉಳಿದೆಲ್ಲಾ ಬೌದ್ಧಿಕ ವಲಯದಲ್ಲಿ ಆದಂತೆಯೇ ಈ ಜನಪದೀಯ ನೆಲೆಗಳಲ್ಲೂ ವೈದಿಕ ಪರಂಪರೆಯೇ ಆವರಿಸಿ, ಆಕ್ರಮಿಸುತ್ತಿರುವುದನ್ನು ಗಮನಿಸುತ್ತಿದ್ದೇವೆ. ಇದರ ಮೂಲ ಕಾರಣಗಳನ್ನು ಶೋಧಿಸಬೇಕಿದೆ.

ಆದರೆ ಪ್ರಸ್ತುತ ಸಂದರ್ಭದಲ್ಲಿ ಈ ಸಾಂಸ್ಕೃತಿಕ ಸಮನ್ವಯದ ನೆಲೆಗಳಲ್ಲೂ ಜಾತಿ, ಮತ, ಪಂಥೀಯ ಗೋಡೆಗಳನ್ನು ನಿರ್ಮಿಸುವ ಪ್ರಯತ್ನವನ್ನು ಕೆಲವು ಮತಾಂಧ ಸಂಘಟನೆಗಳು ಮಾಡುತ್ತಿರುವುದು ಚಿಂತೆಗೀಡುಮಾಡುವ ವಿಚಾರವಾಗಿದೆ. ಬಹುತ್ವ ಭಾರತದ ಸಮನ್ವಯ ಸಂಸ್ಕೃತಿಯ ಮೂಲ ಸೆಲೆಯಂತೆ ಕಾಣುವ ಗ್ರಾಮೀಣ ಬದುಕಿನ ಅವಿಭಾಜ್ಯ ಅಂಗವಾಗಿರುವ ಜಾತ್ರೆಗಳು ಮತ್ತು ಸಂತೆಮಾಳಗಳು ಇಂದಿಗೂ ಸಹ ಜನಸಮುದಾಯಗಳ ನಡುವೆ ಇರಬಹುದಾದ ತಾರತಮ್ಯದ ಗೋಡೆಗಳನ್ನು ಕೆಡವುತ್ತಾ ಒಂದು ಸೌಹಾರ್ದಯುತ ಸಮಾಜವನ್ನು ಕಟ್ಟುವುದರಲ್ಲಿ ನಿರತವಾಗಿವೆ.

ಈ ಮಾರುಕಟ್ಟೆ ತಾಣಗಳು ಶ್ರೀಮಂತಿಕೆಯಲ್ಲಿ ಮೆರೆಯುವ ಬಂಡವಳಿಗ ಸಮುದಾಯವನ್ನು ಪ್ರತಿನಿಧಿಸುವುದಿಲ್ಲ. ಬದಲಾಗಿ ತಮ್ಮ ನಿತ್ಯ ಬದುಕಿನ ಜೀವನೋಪಾಯದ ಮಾರ್ಗಗಳನ್ನು ಕಲ್ಪಿಸಿಕೊಳ್ಳುವ ತಾಣಗಳಾಗಿರುತ್ತವೆ. ಈ ಜಾತ್ರೆಗಳಲ್ಲಿ, ಸಂತೆಗಳಲ್ಲಿ ವ್ಯಾಪಾರ ವಹಿವಾಟು ನಡೆಸುವ ಯಾವುದೇ ಸಮುದಾಯದ ವ್ಯಕ್ತಿಗಾದರೂ ಅದು ಜೀವನೋಪಾಯದ ಮಾರ್ಗವಾಗಿರುತ್ತದೆಯೇ ಹೊರತು, ಬಂಡವಾಳಶೇಖರಣೆ ಅಥವಾ ಲಾಭ ಗಳಿಕೆಯ ದಂಧೆ ಆಗಿರುವುದಿಲ್ಲ. ಹಾಗಾಗಿಯೇ ಮಾರುಕಟ್ಟೆಯ ಸಹಜ ಪೈಪೋಟಿಯ ನಡುವೆಯೇ ಸಂತೆಗಳಲ್ಲಿ, ಜಾತ್ರೆಗಳಲ್ಲಿ ಅಂಗಡಿ ಮುಗ್ಗಟ್ಟುಗಳನ್ನು ನಡೆಸುವವರ ನಡುವೆ ಒಂದು ಸಮನ್ವಯದ, ಸೌಹಾರ್ದತೆಯ ವಾತಾವರಣ ನಿರ್ಮಾಣವಾಗಿರುತ್ತದೆ.

ಇಂತಹ ಒಂದು ಸಾಂಸ್ಕೃತಿಕ ಸಮನ್ವಯದ ವಾತಾವರಣವನ್ನು ಕಲುಷಿತಗೊಳಿಸಲು, ಮತಾಂಧತೆಯ ವಿಷಾನಿಲವನ್ನು ಹರಡುತ್ತಿರುವುದು ದುರಂತ. ಮೂಲತಃ ಶೂದ್ರಾದಿ ದೇವಾನುದೇವತೆಗಳು ಮತ್ತು ಜನಪದೀಯ ನಂಬಿಕೆಗಳನ್ನಾಧರಿಸಿದ ಈ ಜಾತ್ರೆಗಳಲ್ಲಿ ತನ್ನ ಬೇರುಗಳನ್ನು ಹರಡಲು ಯತ್ನಿಸುತ್ತಿರುವ ವೈದಿಕಶಾಹಿ ಪರಂಪರೆ ಅಲ್ಲಿ ತನ್ನದೇ ಆದ ಮಡಿವಂತಿಕೆ, ಪ್ರತ್ಯೇಕತೆ, ಶ್ರೇಷ್ಠತೆಯ ವ್ಯಸನಗಳನ್ನು ಪಸರಿಸಲು ಪ್ರಯತ್ನಿಸುತ್ತಿದೆ.

ಇದರ ಒಂದು ಭಾಗವಾಗಿಯೇ ಕೆಲವು ಹಿಂದೂ ಸಂಘಟನೆಗಳು, ಜಾತ್ರೆಗಳಲ್ಲಿ ಮುಸಲ್ಮಾನರ ಅಂಗಡಿ ಮುಗ್ಗಟ್ಟುಗಳನ್ನು ನಿಷೇಧಿಸಬೇಕು ಎಂದು ಆಗ್ರಹಿಸುತ್ತಿವೆ. ಮತೀಯ ಆಲೋಚನೆ ಮತ್ತು ಮತಾಂಧತೆಯಿಂದ ಮುಕ್ತವಾಗಿರುವ ಒಂದು ಸಮನ್ವಯದ ನೆಲದಲ್ಲಿ ಮತಾಂಧತೆಯ ವಿಷಬೀಜಗಳನ್ನು ಬಿತ್ತುವ ಮೂಲಕ, ಜನಸಮುದಾಯಗಳ ನಡುವೆ ತಾರತಮ್ಯದ, ಪ್ರತ್ಯೇಕತೆಯ ಗೋಡೆಗಳನ್ನು ನಿರ್ಮಿಸುವ ಇಂತಹ ಪ್ರಯತ್ನಗಳನ್ನು ಪ್ರಜ್ಞಾವಂತ ಸಮಾಜ ವಿರೋಧಿಸಲೇಬೇಕಿದೆ.

ದೇಶ ಸ್ವತಂತ್ರವಾಗಿ ಏಳು ದಶಕಗಳು ಕಳೆದರೂ ಇಂದಿಗೂ ದೇವಾಲಯದ ಆವರಣಗಳಲ್ಲಿ ಸಹಪಂಕ್ತಿ ಭೋಜನವನ್ನು ಕಾಣಲಾಗದ ದುರಂತ ಸನ್ನಿವೇಶವನ್ನು ನಾವು ನೋಡುತ್ತಿದ್ದೇವೆ. ದೇವಸ್ಥಾನಗಳಲ್ಲಿ, ಪೂಜಾ ಸ್ಥಳಗಳಲ್ಲಿ ಅಸ್ಪೃಶ್ಯತೆಯ ಆಚರಣೆಯೂ ಇಂದಿಗೂ ಜಾರಿಯಲ್ಲಿದೆ. ಅನ್ನ ಉಣ್ಣುವ ಜಾಗದಲ್ಲಿ ಪ್ರತ್ಯೇಕತೆಯ ಗೋಡೆಗಳನ್ನು ಕಟ್ಟುವುದರಲ್ಲಿ ನಿಷ್ಣಾತವಾಗಿರುವ ಶಕ್ತಿಗಳೇ ಇಂದು ಅನ್ನ ಸಂಪಾದಿಸುವ ಜಾಗಗಳಲ್ಲೂ ಬೇಲಿಗಳನ್ನು ನಿರ್ಮಿಸಲು ಮುಂದಾಗುತ್ತಿವೆ. ಜಾತ್ರೆಗಳಲ್ಲಿ ಮುಸಲ್ಮಾನರ ಅಂಗಡಿ ಮುಗ್ಗಟ್ಟುಗಳನ್ನು ನಿಷೇಧಿಸುವ ಆಗ್ರಹದ ಹಿಂದೆ, ಸಮನ್ವಯ ಸಂಸ್ಕೃತಿಯನ್ನು ಭಂಗಗೊಳಿಸುವ, ಸಾಂಸ್ಕೃತಿಕ ಸೌಹಾರ್ದತೆಯನ್ನು ಕದಡುವ ಕುತಂತ್ರ ಇರುವುದನ್ನು ಗಮನಿಸಬೇಕಿದೆ.

ಈ ಸಮನ್ವಯ ಸಂಸ್ಕೃತಿಯನ್ನು ಹಿಂದೂಗಳ ಜಾತ್ರೆಗಳಲ್ಲಿ ಕಾಣುವಂತೆಯೇ, ಕ್ರೈಸ್ತರ ಹಲವು ಹಬ್ಬ, ಉತ್ಸವಗಳಲ್ಲಿ, ಮುಸಲ್ಮಾನರ ಉರುಸ್, ಮೊಹರಂ ಮುಂತಾದ ಹಬ್ಬಗಳ ಸಂದರ್ಭದಲ್ಲಿ ಕಾಣುತ್ತಲೇ ಬಂದಿದ್ದೇವೆ. ಜನಸಾಮಾನ್ಯರ ಬದುಕಿನ ಒಂದು ಭಾಗವಾಗಿಯೇ ಬೆಳೆದುಬಂದಿರುವ ಸ್ಥಳೀಯ ಮಾರುಕಟ್ಟೆಗಳು ಸದಾ ಸಮನ್ವಯತೆಯೊಂದಿಗೇ ನಡೆದುಬಂದಿವೆ. ಮದುವೆ, ಮುಂಜಿ, ನಾಮಕರಣ, ಹಬ್ಬ ಹರಿದಿನಗಳ ಸಂದರ್ಭಗಳಲ್ಲಿ ಸಣ್ಣ ವ್ಯಾಪಾರದ ವಲಯ ಎಲ್ಲ ಮತ ಧರ್ಮಗಳನ್ನೂ ಪ್ರತಿನಿಧಿಸುತ್ತಲೇ ಬಂದಿದೆ. ಹೂ ಮಾರುವವರಿಂದ ಹಿಡಿದು, ಪೂಜಾ ಸಾಮಗ್ರಿಯನ್ನು ಮಾರುವವರವರೆಗೆ, ಧಾರ್ಮಿಕ ಆಚರಣೆಗಳ ಉಪಕರಣಗಳನ್ನು ಒದಗಿಸುವವರೆಗೆ, ಈ ಸಾಂಸ್ಕೃತಿಕ ಸಮನ್ವಯವನ್ನು ವ್ಯಾಪಾರಿ ವಲಯ ಕಾಪಾಡಿಕೊಂಡುಬಂದಿದೆ.

ಈ ಸಮನ್ವಯದ ನಡುವೆಯೇ ತಲೆದೋರುವ ಅಸ್ಪೃಶ್ಯತೆಯಂತಹ ಹೀನ ಆಚರಣೆಗಳನ್ನು ನಮ್ಮ ಸಮಾಜ ನಿರ್ಲಕ್ಷಿಸುತ್ತಾ ಬಂದಿರುವುದನ್ನೂ ಈ ಸಂದರ್ಭದಲ್ಲಿ ಮರೆಯುವಂತಿಲ್ಲ. ದೇವಸ್ಥಾನಗಳಲ್ಲಿ ಸಹಪಂಕ್ತಿ ಭೋಜನವನ್ನು ನಿರಾಕರಿಸುವ, ಮಡೆ ಸ್ನಾನದಂತಹ ಸಾಂಸ್ಕೃತಿಕ ದೌರ್ಜನ್ಯವನ್ನು ಪ್ರೋತ್ಸಾಹಿಸುವ ಒಂದು ಕ್ರೂರ ವ್ಯವಸ್ಥೆಯಲ್ಲಿ ಅಂತರ್ಗತವಾಗಿರುವ ತಾರತಮ್ಯದ ನೆಲೆಗಳು ಇಂದು ವಿಸ್ತೃತ ನೆಲೆಯಲ್ಲಿ ಅನಾವರಣಗೊಳ್ಳುತ್ತಿವೆ. ಈ ತಾರತಮ್ಯದ ನೆಲೆಗಳನ್ನು ಮತಾಂಧ ಶಕ್ತಿಗಳು ಆಕ್ರಮಿಸಿಕೊಂಡಷ್ಟೂ ಸಾಮಾಜಿಕ ಸೌಹಾರ್ದತೆ ನಾಶವಾಗುತ್ತಲೇ ಹೋಗುತ್ತದೆ. ಹಿಂದುತ್ವ ರಾಜಕಾರಣದ ಏಕಮುಖಿ ಸಂಸ್ಕೃತಿಯನ್ನು ಹೇರುವ ಹುನ್ನಾರಗಳಿಗೆ ಪೂರಕವಾಗಿಯೇ ಈ ಆಕ್ರಮಣಗಳೂ ನಡೆಯುತ್ತಿರುವುದು ಸ್ಪಷ್ಟ.

ಮಾರುಕಟ್ಟೆ ಆರ್ಥಿಕತೆಯ ದೃಷ್ಟಿಯಿಂದಲೂ ಮುಸಲ್ಮಾನರ ವ್ಯಾಪಾರ ನಿಷೇಧಿಸುವ ಪ್ರಯತ್ನಗಳು ಹಲವು ಪಲ್ಲಟಗಳಿಗೆ ಕಾರಣವಾಗುತ್ತವೆ. ಮುಸಲ್ಮಾನರ ಅಂಗಡಿಯಲ್ಲಿ ಬಿಕರಿಯಾಗುವ, ವಿನಿಮಯವಾಗುವ ಪದಾರ್ಥಗಳ ಹಿಂದೆ ಹಲವು ಹಿಂದೂ, ಕ್ರೈಸ್ತ ಸಮುದಾಯಗಳ ಶ್ರಮವೂ ಇರುತ್ತದೆ. ಬಿಕರಿಯಾಗುವ ಪದಾರ್ಥಗಳು ಮೂಲತಃ ಮಾನವ ಶ್ರಮದಿಂದ ಉತ್ಪಾದಿತವಾಗಿರುತ್ತವೆ. ಈ ಉತ್ಪಾದನೆಯ ಪ್ರಕ್ರಿಯೆಯಲ್ಲಿನ ಶ್ರಮವನ್ನು ಜಾತಿ, ಮತ, ಧರ್ಮದ ನೆಲೆಯಲ್ಲಿ ವಿಂಗಡಿಸಲು ಸಾಧ್ಯವಾಗುವುದೂ ಇಲ್ಲ.

ಆದರೆ ಒಂದು ನಿರ್ದಿಷ್ಟ ಮತದ ವ್ಯಾಪಾರಿಗಳಿಗೆ ನಿರ್ಬಂಧ ಹೇರುವುದರಿಂದ, ಉತ್ಪಾದನಾ ವಲಯದ ಸರಾಗ ವಹಿವಾಟುಗಳೂ ಪ್ರಕ್ಷುಬ್ಧವಾಗುತ್ತವೆ ಎಂಬ ವಾಸ್ತವವನ್ನು ನಾವು ಗ್ರಹಿಸಬೇಕಿದೆ. ರೇಷ್ಮೆ ಗೂಡು ತಯಾರಿಸುವವರು ಹಿಂದೂ ಆಗಿದ್ದರೆ, ನೂಲು ತೆಗೆಯುವವರು ಮುಸ್ಲಿಂ ಆಗಿರುತ್ತಾನೆ. ಸೀರೆ ನೇಯುವವನು ನೇಕಾರನಾಗಿರುತ್ತಾನೆ ಅದನ್ನ ಒಬ್ಬ ಮಾರ್ವಾಡಿಯೋ, ವೈಶ್ಯನೋ, ಮುಸಲ್ಮಾನನೋ ಮಾರಾಟ ಮಾಡುತ್ತಾನೆ. ಈ ಶ್ರಮಶಕ್ತಿಯ ವಾಹಿನಿಯೇ ಸಮಾಜದಲ್ಲಿ ಸಮನ್ವಯತೆ, ಸೌಹಾರ್ದತೆಯನ್ನು ಸಂರಕ್ಷಿಸಲು ಸಾಧ್ಯ.

ತಮ್ಮ ಶ್ರಮಶಕ್ತಿಯ ಮೂಲಕ ಸಮಾಜದ ವಿಭಿನ್ನ ಸಮುದಾಯಗಳನ್ನು ಬೆಸೆಯುವ ದುಡಿಯುವ ವರ್ಗಗಳಲ್ಲಿ ಜಾತಿ, ಮತ, ಧರ್ಮ ಅಥವಾ ಪಂಥೀಯ ಪ್ರಜ್ಞೆಯನ್ನು ಬೆಳೆಸುವುದರ ಬದಲು, ವರ್ಗಪ್ರಜ್ಞೆಯನ್ನು ಬೆಳೆಸಲು ಯತ್ನಿಸಿದ್ದರೆ ಬಹುಶಃ ಭಾರತ ಈ ದುಸ್ಥಿತಿಗೆ ತಲುಪುತ್ತಿರಲಿಲ್ಲ. ಈಗಲೂ ಕಾಲ ಮಿಂಚಿಲ್ಲ.

ತಮ್ಮ ಸಾಂಸ್ಕೃತಿಕ ಬೇರುಗಳನ್ನು ಅರಿತು, ತಮ್ಮ ಶ್ರಮಾಧಾರಿತ ಬದುಕಿನ ಮಾರ್ಗಗಳನ್ನು ಹಸನುಗೊಳಿಸುತ್ತಾ, ಜಾತಿ, ಮತ, ಧರ್ಮಗಳ ವಿಷಬೀಜಗಳನ್ನು ಕಿತ್ತೊಗೆದು ಬಹುತ್ವ ಭಾರತದ ಸಮನ್ವಯ ಸಂಸ್ಕೃತಿಯನ್ನು ಕಾಪಾಡಿಕೊಳ್ಳುವ ಹೊಣೆಗಾರಿಕೆ ಈ ದೇಶದ ದುಡಿಯುವ ವರ್ಗಗಳ ಮೇಲಿದೆ.

ಜಾತಿ-ವರ್ಗ ತಾರತಮ್ಯಗಳಿಂದ ಹೊರತಾದ, ದೌರ್ಜನ್ಯಗಳಿಂದ ಮುಕ್ತವಾದ, ಅಸ್ಪೃಶ್ಯತೆ ಮತ್ತು ಪ್ರತ್ಯೇಕತೆಯಂತಹ ಹೀನ ಆಚರಣೆಗಳಿಂದಮುಕ್ತವಾದ,ಮತೀಯತೆ-ಮತಾಂಧತೆಯಂತಹ ವಿಷವಲಯದಿಂದ ಮುಕ್ತವಾದ, ಒಂದು ಮಾನವೀಯ ವಾತಾವರಣವನ್ನು ಸೃಷ್ಟಿಸುವ ಮೂಲಕ, ಇಂದು ಬಿತ್ತಲಾಗುತ್ತಿರುವ ಮತಾಂಧತೆಯ ವಿಷಬೀಜಗಳನ್ನು ನಿರ್ವೀರ್ಯಗೊಳಿಸಲು ಮುನ್ನಡೆಯಬೇಕಿದೆ. ಆಗಲೇ ಕರ್ನಾಟಕ ಅಥವಾ ಭಾರತ “ ಸರ್ವ ಜನಾಂಗದ ಶಾಂತಿಯ ತೋಟ” ಆಗಲು ಸಾಧ್ಯ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Published

on

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.

ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.

ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.

ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.

ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಕನ್ನಡಿಗರ ಮನದ ಜಾನಕಿ

ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.

ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.

ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.

ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ

ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.

ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.

ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.

ಧ್ವನಿಯೊಳಗಿದ್ದ ಸಾವಿರ ರೂಪಗಳು

ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.

ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ

ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.

ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.

ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ

ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.

ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.

ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.

ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.

ಸರಳತೆಯೇ ಅವರ ಅಲಂಕಾರ

ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.

ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ

ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.

ಸಂಗೀತ ಲೋಕದ ಕಂಬನಿ

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.

“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.

ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ

ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.

ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.

ಸ್ವರ ಮೌನವಾದರೂ…

ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.

ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.

ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.

ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ

Published

on

ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಮಹತ್ವದ ಜವಾಬ್ದಾರಿಯನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ನೀಡಿದೆ.

ಈ ನೇಮಕ ಕೇವಲ ಸಂಘಟನಾತ್ಮಕ ಬದಲಾವಣೆಯಲ್ಲ. ಕರ್ನಾಟಕ ಕಾಂಗ್ರೆಸ್‌ನ ಮುಂದಿನ ರಾಜಕೀಯ ದಿಕ್ಕು, ಪಕ್ಷದ ಒಳಾಂಗಣ ಸಮತೋಲನ ಮತ್ತು ಭವಿಷ್ಯದ ಚುನಾವಣಾ ತಂತ್ರಗಳಿಗೆ ಇದು ಪ್ರಮುಖ ಸೂಚನೆಯಾಗಿದೆ. ಹಲವು ದಶಕಗಳ ರಾಜಕೀಯ ಅನುಭವ, ಸಂಘಟನಾ ಕೌಶಲ್ಯ ಮತ್ತು ಹೈಕಮಾಂಡ್‌ಗೆ ನಿಕಟ ಸಂಪರ್ಕ ಹೊಂದಿರುವ ಹರಿಪ್ರಸಾದ್ ಅವರು ಈಗ ರಾಜ್ಯ ಕಾಂಗ್ರೆಸ್‌ನ ನೂತನ ಸಾರಥಿಯಾಗಿ ಹೊರಹೊಮ್ಮಿದ್ದಾರೆ.

ಆರಂಭಿಕ ಜೀವನ ಮತ್ತು ಶಿಕ್ಷಣ

ಬಿ.ಕೆ. ಹರಿಪ್ರಸಾದ್ ಅವರು 1954ರ ಜುಲೈ 29ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಎ. ಕೆಂಪಯ್ಯ ಹಾಗೂ ತಾಯಿ ಕೆ. ಗುಣಾವತಿ. ಬಾಲ್ಯದಿಂದಲೇ ಸಾಮಾಜಿಕ ಮತ್ತು ರಾಜಕೀಯ ಚಟುವಟಿಕೆಗಳತ್ತ ಆಸಕ್ತಿ ಹೊಂದಿದ್ದ ಅವರು ಬೆಂಗಳೂರಿನ ಎಂ.ಇ.ಎಸ್. ಕಾಲೇಜಿನಲ್ಲಿ ಬಿ.ಕಾಂ ಪದವಿ ಶಿಕ್ಷಣ ಪಡೆದರು. ವಿದ್ಯಾರ್ಥಿ ಜೀವನದಲ್ಲಿಯೇ ಕಾಂಗ್ರೆಸ್ ಚಟುವಟಿಕೆಗಳೊಂದಿಗೆ ಗುರುತಿಸಿಕೊಂಡ ಅವರು ಮುಂದೆ ಪೂರ್ಣಾವಧಿ ರಾಜಕಾರಣಿಯಾಗಿ ಬೆಳೆದರು.

ವಿದ್ಯಾರ್ಥಿ ರಾಜಕಾರಣದಿಂದ ರಾಷ್ಟ್ರೀಯ ಮಟ್ಟದ ನಾಯಕತ್ವದವರೆಗೆ

ಹರಿಪ್ರಸಾದ್ ಅವರ ರಾಜಕೀಯ ಬದುಕು ವಿದ್ಯಾರ್ಥಿ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಸಂಘಟನೆಗಳಿಂದ ಆರಂಭವಾಯಿತು. ಸಂಘಟನಾ ರಾಜಕಾರಣದಲ್ಲಿ ತೋರಿದ ಸಾಮರ್ಥ್ಯದಿಂದ ಅವರು ಶೀಘ್ರದಲ್ಲೇ ಪಕ್ಷದ ಹಿರಿಯ ನಾಯಕರ ಗಮನ ಸೆಳೆದರು.

ರಾಜ್ಯ ಮಟ್ಟದಲ್ಲಿ ಮಾತ್ರವಲ್ಲದೆ ರಾಷ್ಟ್ರೀಯ ಮಟ್ಟದಲ್ಲೂ ಕಾಂಗ್ರೆಸ್ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ ಅವರು, ಹಲವು ರಾಜ್ಯಗಳ ಕಾಂಗ್ರೆಸ್ ವ್ಯವಹಾರಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಹೈಕಮಾಂಡ್‌ನೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ನಾಯಕರಲ್ಲಿ ಹರಿಪ್ರಸಾದ್ ಪ್ರಮುಖರು ಎಂದು ಪರಿಗಣಿಸಲಾಗುತ್ತದೆ.

ಬಿ.ಕೆ. ಹರಿಪ್ರಸಾದ್ ಅವರು ಹಲವು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. 1990ರಿಂದಲೇ ಅವರು ರಾಷ್ಟ್ರೀಯ ರಾಜಕಾರಣದಲ್ಲಿ ಸಕ್ರಿಯ ಪಾತ್ರ ವಹಿಸುತ್ತಾ ಬಂದಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪರವಾಗಿ ಹಲವು ವಿಷಯಗಳ ಬಗ್ಗೆ ಧ್ವನಿ ಎತ್ತಿದ ಅವರು ಸಂಸತ್ತಿನ ಚರ್ಚೆಗಳಲ್ಲಿ ಗಮನ ಸೆಳೆದಿದ್ದರು.

ಅವರು ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಒಕ್ಕೂಟದ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ಆ ಸಂದರ್ಭದಲ್ಲಿ ಎನ್‌ಡಿಎ ಅಭ್ಯರ್ಥಿ ಹರಿವಂಶ್ ನಾರಾಯಣ್ ಸಿಂಗ್ ವಿರುದ್ಧ ಪೈಪೋಟಿ ನಡೆಸಿದ್ದರು. ಸೋಲು ಕಂಡಿದ್ದರೂ ರಾಷ್ಟ್ರೀಯ ರಾಜಕೀಯದಲ್ಲಿ ಅವರ ಸ್ಥಾನಮಾನ ಮತ್ತಷ್ಟು ಬಲವತ್ತಾಯಿತು.

1999ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿಯ ಹಿರಿಯ ನಾಯಕ ಅನಂತ್ ಕುಮಾರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಜಯ ಸಾಧಿಸಲು ಸಾಧ್ಯವಾಗದಿದ್ದರೂ ಅವರು ಕಾಂಗ್ರೆಸ್‌ನ ಪ್ರಮುಖ ಮುಖವಾಗಿ ಗುರುತಿಸಿಕೊಂಡರು.

ಸಂಘಟನಾ ರಾಜಕಾರಣದಲ್ಲಿ ಹೆಚ್ಚು ಸಕ್ರಿಯರಾಗಿದ್ದ ಕಾರಣ, ಚುನಾವಣಾ ಗೆಲುವಿಗಿಂತ ಪಕ್ಷ ನಿರ್ಮಾಣದಲ್ಲಿ ಅವರ ಪಾತ್ರವೇ ಹೆಚ್ಚು ಗಮನ ಸೆಳೆಯಿತು.

ಕಾಂಗ್ರೆಸ್ ಸಂಘಟನೆಯಲ್ಲಿ ‘ಟಾಸ್ಕ್ ಮಾಸ್ಟರ್’

ಕಾಂಗ್ರೆಸ್ ಪಕ್ಷದಲ್ಲಿ ಹರಿಪ್ರಸಾದ್ ಅವರನ್ನು ಸಂಘಟನಾ ತಜ್ಞ ಎಂದು ಕರೆಯಲಾಗುತ್ತದೆ. ಪಕ್ಷ ಎದುರಿಸಿದ ಸಂಕಷ್ಟದ ಸಂದರ್ಭಗಳಲ್ಲಿ ಹಲವು ರಾಜ್ಯಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿ ಸಂಘಟನೆಯನ್ನು ಬಲಪಡಿಸಿದ ಅನುಭವ ಅವರಿಗೆ ಇದೆ.

ಇತ್ತೀಚಿನ ಅವಧಿಯಲ್ಲಿ ಅವರು ಹರಿಯಾಣ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯ ರಾಜಕೀಯದ ಸೂಕ್ಷ್ಮ ಸಮೀಕರಣಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಮತ್ತು ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಸಾಧಿಸುವ ಶೈಲಿ ಅವರ ವಿಶೇಷತೆ ಎಂದು ಪಕ್ಷದ ನಾಯಕರು ಹೇಳುತ್ತಾರೆ.

ಕರ್ನಾಟಕ ಕಾಂಗ್ರೆಸ್‌ನಲ್ಲಿ ಹರಿಪ್ರಸಾದ್ ಅವರು ಹಲವು ದಶಕಗಳಿಂದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳ ಸಂದರ್ಭದಲ್ಲೂ ಅವರು ಸಮತೋಲನ ಸಾಧಿಸುವ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.

ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅವರು, 2022 ರಿಂದ 2023ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸರ್ಕಾರದ ನೀತಿಗಳ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸುವ ಮೂಲಕ ಅವರು ಗಮನ ಸೆಳೆದಿದ್ದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ

2026ರಲ್ಲಿ ಕರ್ನಾಟಕ ರಾಜಕೀಯದಲ್ಲಿ ನಡೆದ ನಾಯಕತ್ವ ಬದಲಾವಣೆಯ ಬಳಿಕ ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ. ಶಿವಕುಮಾರ್ ವಹಿಸಿಕೊಂಡರು. ಇದರ ಪರಿಣಾಮವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಪಕ್ಷದೊಳಗೆ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದರೂ ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿತು.

ಈ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹೈಕಮಾಂಡ್ ಸಂಘಟನಾ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿ ಪರಿಗಣಿಸಿದೆ. ಪಕ್ಷದ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮತೋಲನ ಕಾಯ್ದುಕೊಳ್ಳಲು ಹರಿಪ್ರಸಾದ್ ಅವರ ಅನುಭವ ನೆರವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಹಿಂದೆ ಹಲವು ರಾಜಕೀಯ ಕಾರಣಗಳಿವೆ. ಮೊದಲನೆಯದಾಗಿ, ಅವರು ಯಾವುದೇ ಒಂದು ಗುಂಪಿಗೆ ಸೀಮಿತವಾಗದ ನಾಯಕ ಎಂಬ ಚಿತ್ರಣ ಹೊಂದಿದ್ದಾರೆ. ಎರಡನೆಯದಾಗಿ, ಸಂಘಟನಾ ಅನುಭವ ಅಪಾರವಾಗಿದೆ. ಮೂರನೆಯದಾಗಿ, ಹೈಕಮಾಂಡ್‌ಗೆ ಅತ್ಯಂತ ವಿಶ್ವಾಸಾರ್ಹ ನಾಯಕರಲ್ಲಿ ಒಬ್ಬರು. ನಾಲ್ಕನೆಯದಾಗಿ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳು ಮತ್ತು ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಾಮರ್ಥ್ಯ ಅವರಿಗಿದೆ ಎಂದು ಕಾಂಗ್ರೆಸ್ ನಾಯಕತ್ವ ನಂಬಿದೆ.

ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಅವರ ಮುಂದಿರುವ ಸವಾಲುಗಳು ಸಣ್ಣದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಸಂಘಟನೆಯನ್ನು ಸದೃಢವಾಗಿಡುವುದು ದೊಡ್ಡ ಜವಾಬ್ದಾರಿ. ಕಾರ್ಯಕರ್ತರ ಅಸಮಾಧಾನ, ಸಚಿವ ಸ್ಥಾನಾಕಾಂಕ್ಷಿಗಳ ಒತ್ತಡ, ಪ್ರಾದೇಶಿಕ ಸಮೀಕರಣಗಳು ಮತ್ತು ಜಾತಿ ಆಧಾರಿತ ರಾಜಕೀಯ ಬೇಡಿಕೆಗಳನ್ನು ಸಮತೋಲನಗೊಳಿಸಬೇಕಾಗಿದೆ.

ಇದರ ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಸಂಘಟನೆಯನ್ನು ನಿರಂತರ ಚಟುವಟಿಕೆಯಲ್ಲಿ ಇರಿಸುವುದು ಅವರ ಪ್ರಮುಖ ಗುರಿಯಾಗಲಿದೆ.

ಹರಿಪ್ರಸಾದ್ ಅವರು ಹೆಚ್ಚು ಪ್ರಚಾರಪ್ರಿಯ ರಾಜಕಾರಣಿಯಲ್ಲ. ಸಂಘಟನೆಯೊಳಗೆ ಕೆಲಸ ಮಾಡುವ ನಾಯಕ ಎಂಬ ಹೆಗ್ಗಳಿಕೆ ಅವರಿಗೆ ಇದೆ. ಕಾರ್ಯಕರ್ತರೊಂದಿಗೆ ನೇರ ಸಂಪರ್ಕ, ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಮತ್ತು ತಾಳ್ಮೆಯ ರಾಜಕೀಯ ಅವರ ಕಾರ್ಯಶೈಲಿಯ ಮುಖ್ಯ ಲಕ್ಷಣಗಳು.

ಅವರ ರಾಜಕೀಯ ಜೀವನದಲ್ಲಿ ಅನೇಕ ಏರಿಳಿತಗಳು ಬಂದಿದ್ದರೂ ಪಕ್ಷದ ಮೇಲಿನ ನಿಷ್ಠೆ ಪ್ರಶ್ನಾತೀತವಾಗಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಹಲವು ಬಾರಿ ಅವರಿಗೆ ಪ್ರಮುಖ ಜವಾಬ್ದಾರಿಗಳನ್ನು ನೀಡಿದೆ.

ರಾಜಕೀಯದ ಜೊತೆಗೆ ಸರಳ ಜೀವನಶೈಲಿಗೆ ಹೆಸರುವಾಸಿಯಾಗಿರುವ ಹರಿಪ್ರಸಾದ್ ಅವರು ಉಷಾ ಅವರೊಂದಿಗೆ ದಾಂಪತ್ಯ ಜೀವನ ನಡೆಸುತ್ತಿದ್ದಾರೆ. ಅವರಿಗೆ ಒಬ್ಬ ಪುತ್ರಿಯಿದ್ದಾರೆ. ಕುಟುಂಬ ಜೀವನವನ್ನು ರಾಜಕೀಯದಿಂದ ಸಾಧ್ಯವಾದಷ್ಟು ದೂರ ಇಡುವ ನಾಯಕ ಎಂಬ ಹೆಸರನ್ನು ಅವರು ಗಳಿಸಿದ್ದಾರೆ.

ಭವಿಷ್ಯದ ರಾಜಕೀಯ ಪಾತ್ರ

ಕೆಪಿಸಿಸಿ ಅಧ್ಯಕ್ಷ ಸ್ಥಾನ ಹರಿಪ್ರಸಾದ್ ಅವರ ರಾಜಕೀಯ ಜೀವನದ ಮತ್ತೊಂದು ಮಹತ್ವದ ಅಧ್ಯಾಯವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮನ್ವಯ ಸಾಧಿಸುವಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ.

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ತಂತ್ರ ರೂಪಿಸುವುದು, ಕಾರ್ಯಕರ್ತರ ಬಲವರ್ಧನೆ, ಚುನಾವಣಾ ಸಿದ್ಧತೆ ಮತ್ತು ಹೈಕಮಾಂಡ್‌ನೊಂದಿಗೆ ಸಮನ್ವಯ ಸಾಧಿಸುವ ಪ್ರಮುಖ ಹೊಣೆಗಾರಿಕೆ ಅವರ ಮೇಲಿದೆ. ಈ ಎಲ್ಲ ಸವಾಲುಗಳನ್ನು ಅವರು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಕರ್ನಾಟಕ ಕಾಂಗ್ರೆಸ್‌ನ ಮುಂದಿನ ರಾಜಕೀಯ ಭವಿಷ್ಯ ಬಹುಮಟ್ಟಿಗೆ ಅವಲಂಬಿತವಾಗಿದೆ.

ಸುಮಾರು ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಕಾಂಗ್ರೆಸ್ ಸಂಘಟನೆಯಲ್ಲಿ ದುಡಿದಿರುವ ಬಿ.ಕೆ. ಹರಿಪ್ರಸಾದ್ ಇಂದು ಕರ್ನಾಟಕ ಕಾಂಗ್ರೆಸ್‌ನ ಅತ್ಯುನ್ನತ ಸಂಘಟನಾ ಹುದ್ದೆಯನ್ನು ಅಲಂಕರಿಸಿದ್ದಾರೆ. ವಿದ್ಯಾರ್ಥಿ ರಾಜಕಾರಣದಿಂದ ಆರಂಭವಾದ ಅವರ ಪಯಣ ರಾಜ್ಯಸಭೆ, ರಾಷ್ಟ್ರೀಯ ಸಂಘಟನೆ, ವಿಧಾನ ಪರಿಷತ್ ಮತ್ತು ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನವರೆಗೆ ತಲುಪಿದೆ.

ಅನುಭವ, ಸಂಘಟನಾ ಕೌಶಲ್ಯ, ರಾಜಕೀಯ ಪ್ರೌಢಿಮೆ ಮತ್ತು ಪಕ್ಷದ ಮೇಲಿನ ನಿಷ್ಠೆ ಎಂಬ ನಾಲ್ಕು ಅಂಶಗಳು ಅವರ ರಾಜಕೀಯ ವ್ಯಕ್ತಿತ್ವದ ಪ್ರಮುಖ ಗುರುತುಗಳಾಗಿವೆ. ಕರ್ನಾಟಕ ಕಾಂಗ್ರೆಸ್ ಹೊಸ ರಾಜಕೀಯ ಹಾದಿಯಲ್ಲಿ ಸಾಗುತ್ತಿರುವ ಈ ಸಂದರ್ಭದಲ್ಲಿ, ಬಿ.ಕೆ. ಹರಿಪ್ರಸಾದ್ ಅವರ ನಾಯಕತ್ವ ಪಕ್ಷಕ್ಕೆ ಹೊಸ ಶಕ್ತಿ ತುಂಬುತ್ತದೆಯೇ ಎಂಬುದನ್ನು ರಾಜ್ಯದ ರಾಜಕೀಯ ಕುತೂಹಲದಿಂದ ಗಮನಿಸುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending