ಬಹಿರಂಗ
ಮತಾಂತರ ನಿಷೇಧ ಕಾಯ್ದೆ : ಅಸಾಂವಿಧಾನಿಕ ಶಾಸನ ಮಾನವೀಯ ಜಗತ್ತಿಗೆ ಮಾನವ ಸೌಹಾರ್ದತೆಗೆ ಮತ ಅನಿವಾರ್ಯವಲ್ಲ ನಿಮಿತ್ತ ಮಾತ್ರ
- ನಾ ದಿವಾಕರ
ಒಂದು ಸ್ವಸ್ಥ ಸಮಾಜಕ್ಕೆ ಬೇಕಾಗಿರುವುದು ಪರಸ್ಪರ ಸೌಹಾರ್ದಯುತವಾಗಿ ಬಾಳಲು ಅನುಕೂಲವಾದಂತಹ ಮನುಜ ಸಂಬಂಧಗಳು. ಮನುಜ ಸಂಬಂಧಗಳನ್ನು ನಿರ್ಮಿಸಲು ಬೇಕಿರುವುದು ಪರಸ್ಪರ ವಿಶ್ವಾಸ ಮತ್ತು ನಂಬಿಕೆ. ಈ ನಂಬಿಕೆಗಳನ್ನು ರೂಢಿಸಿಕೊಳ್ಳಲು ಬೇಕಿರುವುದು ಮಾನವ ಪ್ರಜ್ಞೆ. ಇದನ್ನು ಹೊರತಾದ ಯಾವುದೇ ಅಸ್ಮಿತೆಗಳು ಮಾನವ ಜಗತ್ತಿಗೆ ಅನಗತ್ಯವಾದುದು. ಹಾಗೆಯೇ ಒಂದು ಮತ ಅಥವಾ ಧರ್ಮ ಅಥವಾ ಜಾತಿ, ಪಂಥ, ಪಂಗಡ ಇತ್ಯಾದಿ.
ಆದರೂ ಮಾನವ ಸಮಾಜ ತನ್ನ ಸಾಂಸ್ಥಿಕ, ಸಾಮುದಾಯಿಕ, ಜನಾಂಗೀಯ ಅಸ್ಮಿತೆಗಳಿಂದಾಚೆಗೆ ಬದುಕುವುದನ್ನೇ ಕಲಿತಿಲ್ಲ ಎನ್ನುವುದು ನಮ್ಮ ಕಣ್ಣೆದುರಿನ ವಾಸ್ತವ. ಮಾನವ ಸಮಾಜವೇ ರೂಪಿಸಿಕೊಂಡ ಒಂದು ನಿರ್ದಿಷ್ಟ ಮತ, ಹಿಂದೂ-ಇಸ್ಲಾಂ-ಕ್ರೈಸ್ತ ಇತ್ಯಾದಿ, ತನ್ನ ಸಾಂಸ್ಥಿಕ ಸ್ವರೂಪವನ್ನು ಗಟ್ಟಿಗೊಳಿಸುವ ಹಾದಿಯಲ್ಲಿ ಮಾನವೀಯ ಸ್ಪರ್ಶವನ್ನೇ ಕಳೆದುಕೊಂಡು ಅಸ್ಮಿತೆಗಳ ಶರಮಂಚದ ಮೇಲೆ ಆಸೀನರಾಗಿಬಿಡುತ್ತವೆ.
ಈ ಅಸ್ಮಿತೆಗಳ ಚೌಕಟ್ಟಿನಲ್ಲೇ ಹುಟ್ಟಿ ಬೆಳೆದು ತಮ್ಮ ವ್ಯಕ್ತಿಗತ ನಂಬಿಕೆಗಳನ್ನು ರೂಢಿಸಿಕೊಳ್ಳುವ ಮನುಷ್ಯನಿಗೆ ಮತ ಅಥವಾ ಧರ್ಮ ಎನ್ನುವುದು ಒಂದು ಸಾಂತ್ವನದ ನೆಲೆಯಾಗಿ ಮಾತ್ರವೇ ನೆರವಾಗುತ್ತದೆ. ನಿತ್ಯ ಜೀವನದ ಸಂಕಷ್ಟಗಳನ್ನು ಮರೆಯಲು, ತನ್ನ ಬದುಕಿನ ಹತಾಶೆ ಮತ್ತು ಆತಂಕಗಳನ್ನು ಹೋಗಲಾಡಿಸಿಕೊಳ್ಳಲು ಮನುಷ್ಯ ಜೀವಿಗೆ ತನ್ನ ವ್ಯಾಪ್ತಿಗೆ ನಿಲುಕದ ಅತೀತ ಶಕ್ತಿಯ ಮೊರೆ ಹೋಗುವುದು ಅನಿವಾರ್ಯವಲ್ಲವಾದರೂ, ಹಲವಾರು ಸಂದರ್ಭಗಳಲ್ಲಿ ಅವಶ್ಯಕವಾಗಿಬಿಡುತ್ತದೆ.
ಬಡತನದ ಬೇಗುದಿ, ಹಸಿವು, ಸಾಮಾಜಿಕ ತಾರತಮ್ಯ , ದೌರ್ಜನ್ಯ ಮತ್ತು ಎಲ್ಲಕ್ಕಿಂತಲೂ ಮುಖ್ಯವಾಗಿ ಜಾತಿ ಶ್ರೇಷ್ಠತೆಯಿಂದ ಪೋಷಿಸಲ್ಪಡುವ ಅಸ್ಪೃಶ್ಯತೆ ತಳಸಮುದಾಯಗಳ ಬದುಕಿನ ಹಾದಿಗೆ ಮುಳ್ಳುಗಳಾಗಿಯೇ ಕಾಣುತ್ತದೆ. ಈ ಸಾಮಾಜಿಕ ಅನ್ಯಾಯಗಳ ಚೌಕಟ್ಟಿನಲ್ಲೇ ತನ್ನ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಳೆದುಕೊಳ್ಳುವ ಮತ್ತು ಘನತೆಯ ಬದುಕಿನ ಹಕ್ಕಿನಿಂದ ವಂಚಿತನಾಗುವ ವ್ಯಕ್ತಿ ಅಥವಾ ಸಮುದಾಯ, ಜನ್ಮದಾರಭ್ಯ ಒದಗಿಬಂದ ಮತ ಅಥವಾ ಧರ್ಮದ ನೆಲೆಗಳನ್ನು ತೊರೆದು ಮತ್ತೊಂದು ನೆಮ್ಮದಿಯ ತಾಣವನ್ನು ಅರಸುವುದು ಒಂದು ಸಹಜ ಸ್ವಾಭಾವಿಕ ಪ್ರಕ್ರಿಯೆ.
ಇಂದು ವ್ಯಾಪಕ ಚರ್ಚೆ ಮತ್ತು ವಿವಾದಕ್ಕೊಳಗಾಗಿರುವ ಮತಾಂತರದ ಪ್ರಶ್ನೆಯನ್ನೂ ಹೀಗೆಯೇ ನೋಡಬೇಕಿದೆ. ಸಾಂವಿಧಾನಿಕವಾಗಿ ಒದಗಿಸಲಾಗಿರುವ ವ್ಯಕ್ತಿಸ್ವಾತಂತ್ರ್ಯದೊಂದಿಗೇ ಭಾರತದ ಪ್ರಜೆಗಳಿಗೆ ತಮ್ಮ ಆಯ್ಕೆಯನುಸಾರ ಯಾವುದೇ ಮತವನ್ನು ಅನುಸರಿಸುವ ಸ್ವಾತಂತ್ರ್ಯವನ್ನೂ ನೀಡಲಾಗಿದೆ. ಸಂವಿಧಾನದ ಮೂರನೆಯ ಪರಿಚ್ಚೇದದಲ್ಲಿ ಮೂಲಭೂತ ಹಕ್ಕುಗಳನ್ನು ಪ್ರಸ್ತಾಪಿಸಲಾಗಿದೆ.
ಸಂವಿಧಾನ ವಿಧಿ 25 ರಿಂದ 28ರವರೆಗಿನ ನಿಯಮಗಳು ಭಾರತದ ಪ್ರತಿಯೊಬ್ಬ ಪ್ರಜೆಗೂ ಯಾವುದೇ ಧರ್ಮವನ್ನು ಪಾಲಿಸುವ, ಅನುಸರಿಸುವ, ಪ್ರಚಾರ ಮಾಡುವ ಮತ್ತು ಆಚರಿಸುವ ಹಕ್ಕನ್ನು ನೀಡುತ್ತದೆ. ಸಾರ್ವಜನಿಕ ಸುವ್ಯವಸ್ಥೆಯನ್ನು, ನೈತಿಕತೆಯನ್ನು ಮತ್ತು ಆರೋಗ್ಯಕರ ವಾತಾವರಣವನ್ನು ಕಾಪಾಡಿಕೊಳ್ಳುವುದು ಈ ನಿಟ್ಟಿನಲ್ಲಿ ಅವಶ್ಯವಾಗಿರುತ್ತದೆ. ಅಂದರೆ ಯಾವುದೇ ವ್ಯಕ್ತಿಗೆ ತನ್ನ ವ್ಯಕ್ತಿಗತ ಬದುಕಿನಲ್ಲಿ ತನ್ನ ಮತವನ್ನು ತೊರೆದು ಮತ್ತೊಂದು ಮತವನ್ನು ಆಚರಿಸುವ ಹಕ್ಕು ಇರುತ್ತದೆ. ಈ ಸಾಂವಿಧಾನಿಕ ಹಕ್ಕು ಇಂದು ಮತಾಂತರದ ಪ್ರಶ್ನೆಯಾಗಿ ಪರಿಣಮಿಸಿದೆ.
ಮತಾಂತರ ಮತ್ತು ರಾಜಕಾರಣ
1960ರ ದಶಕದಿಂದಲೂ ಭಾರತದಲ್ಲಿ ಮತಾಂತರ ಒಂದು ರಾಜಕೀಯ ಚೌಕಟ್ಟಿನಲ್ಲೇ ಚರ್ಚೆಗೊಳಗಾಗುತ್ತಿದೆ. ಜನಸಾಮಾನ್ಯರ ಬದುಕಿನಲ್ಲಿ ಯಾವುದೇ ಪ್ರಕ್ಷುಬ್ಧತೆ ಉಂಟುಮಾಡದ ಈ ವಿದ್ಯಮಾನ ರಾಜಕೀಯ ವಲಯದಲ್ಲಿ ಅಲ್ಲೋಲಕಲ್ಲೋಲ ಉಂಟುಮಾಡುತ್ತದೆ. ಬಿಜೆಪಿ ಸರ್ಕಾರಗಳಿಗೆ ಮತ್ತು ಸಂಘಪರಿವಾರಕ್ಕೆ ತಮ್ಮ ಹಿಂದುತ್ವ ಕಾರ್ಯಸೂಚಿಯನ್ನು ಕಾರ್ಯಗತಗೊಳಿಸಲು ಮತಾಂತರದ ಪ್ರಶ್ನೆ ಒಂದು ಪ್ರಬಲ ಅಸ್ತ್ರವಾಗಿದೆ. “ ಅವಿದ್ಯಾವಂತ, ಬಡ ಹಿಂದೂಗಳು ಹಿಂದೂ ಧರ್ಮದ ವಿರುದ್ಧ ನಡೆಯುತ್ತಿರುವ ಅಪಪ್ರಚಾರಕ್ಕೆ ಬಲಿಯಾಗಿ ಅನ್ಯಧರ್ಮಗಳನ್ನು ಸ್ವೀಕರಿಸುತ್ತಿದ್ದಾರೆ.
ಹಾಗಾಗಿ ಇತರ ರಾಜ್ಯಗಳಲ್ಲಿನ ಮತಾಂತರ ನಿಷೇಧ ಕಾಯ್ದೆಗಳನ್ನು ಪರಾಮರ್ಶಿಸಿ ರಾಜ್ಯದಲ್ಲೂ ಅಂತಹುದೇ ಕಾಯ್ದೆಯನ್ನು ಜಾರಿಗೊಳಿಸಬೇಕು ” ಎಂದು ಭಾಜಪದ ಮಂತ್ರಿಗಳೊಬ್ಬರು 2009ರಲ್ಲೇ ಹೇಳಿದ್ದುಂಟು. ಈಗ ಬೊಮ್ಮಾಯಿ ಸರ್ಕಾರ ಇಂತಹ ಕಾಯ್ದೆಯೊಂದನ್ನು ಜಾರಿಗೊಳಿಸಲು ಮುಂದಾಗಿದೆ.
ಕ್ರೈಸ್ತ ಮಿಷನರಿಗಳು ಬಲವಂತವಾಗಿ, ಪ್ರಲೋಭನೆಗಳನ್ನೊಡ್ಡಿ, ಆಸೆ ಆಮಿಷಗಳನ್ನು ತೋರಿಸಿ ಮತಾಂತರಕ್ಕೆ ಪ್ರಚೋದಿಸುತ್ತಿದ್ದಾರೆ ಎಂಬ ಆರೋಪಕ್ಕೆ ಸೂಕ್ತ ಸಾಕ್ಷ್ಯಾಧಾರಗಳಿಲ್ಲದಿರುವುದು ಒಂದೆಡೆಯಾದರೆ, ಇನ್ನೊಂದೆಡೆ ಕೆಲವು ಮತೀಯ ಕಾವಲುಪಡೆಗಳ ಉನ್ಮತ್ತ ಭಾವನೆ ಮತ್ತು ಅಭಿಪ್ರಾಯಗಳನ್ನೇ ಅಂತಿಮ ಸತ್ಯ ಎಂದೆಣಿಸುವುದು ಪ್ರಸ್ತುತ ಸನ್ನಿವೇಶಕ್ಕೆ ಕಾರಣವಾಗಿದೆ. “ಮತಾಂತರವನ್ನು ಒಪ್ಪಬಹುದು ಆದರೆ ಬಲವಂತದ ಮತಾಂತರ ಒಪ್ಪಲಾಗುವುದಿಲ್ಲ” ಎಂಬ ಉದಾರವಾದಿ ಚಿಂತನೆಗೂ ಸಾಕಷ್ಟು ಮೆರುಗು ನೀಡುವಲ್ಲಿ ಪ್ರಸ್ತುತ ಬೆಳವಣಿಗೆಗಳು ಸಹಕಾರಿಯಾಗಿವೆ.
ಭಾರತದ ಪ್ರತಿಯೊಬ್ಬ ವ್ಯಕ್ತಿಗೂ ತನ್ನದೇ ಆದ ಮತ ಧರ್ಮವನ್ನು ಆಯ್ಕೆ ಮಾಡಿಕೊಳ್ಳುವ ಮತ್ತು ಪಾಲಿಸುವ ಸಂವಿಧಾನಾತ್ಮಕ ಹಕ್ಕು ಇರುವುದಾದರೂ, ಸಂವಿಧಾನವನ್ನು ಒಪ್ಪಿರುವ ರಾಜಕೀಯ ಪಕ್ಷಗಳೇ ಮತಾಂತರದ ವಿರುದ್ಧ ಸಮರ ಸಾರುತ್ತಿರುವುದು ಮತನಿರಪೇಕ್ಷ ಸಂವಿಧಾನಕ್ಕೆ ದ್ರೋಹ ಬಗೆದಂತಾಗಿದೆ.
ಸ್ವಾತಂತ್ರ್ಯಪೂರ್ವದಲ್ಲೂ ಸಹ, 1936ರಲ್ಲಿ ರಾಯ್ಘರ್, 1942ರಲ್ಲಿ ಸರಗುಜಾ, 1946ರಲ್ಲಿ ಉದಯ್ಪುರ ಸಂಸ್ಥಾನಗಳು ಮತಾಂತರ ನಿಷೇದ ಕಾಯ್ದೆಯನ್ನು ಜಾರಿಗೊಳಿಸಿದ್ದನ್ನು ದಾಖಲಿಸಲಾಗಿದೆ. ಸ್ವತಂತ್ರ ಭಾರತದಲ್ಲಿ ಮೊಟ್ಟ ಮೊದಲನೆಯದಾಗಿ ಧರ್ಮ ಪರಿವರ್ತನೆಯ ವಿರುದ್ಧ ಶಾಸನ ಜಾರಿಗೊಳಿಸಿದ್ದು ಒರಿಸ್ಸಾದಲ್ಲಿ, 1967ರ ಒರಿಸ್ಸಾ ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆಯ ಮೂಲಕ.
ಈ ಕಾಯ್ದೆಯಲ್ಲಿ “ ಯಾವುದೇ ವ್ಯಕ್ತಿಯು ನೇರವಾಗಿ ಅಥವಾ ಪರೋಕ್ಷವಾಗಿ ಮತ್ತೊಬ್ಬ ವ್ಯಕ್ತಿಯನ್ನು, ಪ್ರಲೋಭನೆಯನ್ನು ಒಡ್ಡಿ, ಬಲಾತ್ಕಾರ ಮಾಡಿ ಅಥವಾ ಮೋಸ ಮಾಡಿ, ಒಂದು ಧರ್ಮದಿಂದ ಮತ್ತೊಂದು ಧರ್ಮಕ್ಕೆ ಪರಿವರ್ತಿಸುವಂತಿಲ್ಲ ” ಎಂದು ಹೇಳಲಾಗಿದೆ. ತದನಂತರ ಇದೇ ಹಾದಿಯನ್ನು ಅನುಸರಿಸಿ ಮಧ್ಯಪ್ರದೇಶ-1968, ಅರುಣಾಚಲಪ್ರದೇಶ-1978, ಗುಜರಾತ್-2003, ಛತ್ತಿಸ್ಗಢ್-2003, ರಾಜಸ್ತಾನ-2005, ಹಿಮಾಚಲ ಪ್ರದೇಶ-2006 ಮತ್ತು ತಮಿಳುನಾಡು-2002 ರಲ್ಲಿ ಇದೇ ರೀತಿಯ ಶಾಸನವನ್ನು ಜಾರಿಗೊಳಿಸಿದ್ದವು. ಈಗ ಉತ್ತರ ಪ್ರದೇಶದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಲ್ಲಿದ್ದು ಇದು ಮೂಲತಃ ಮುಸ್ಲಿಂ ಯುವಕರ ಮೇಲೆ ಗುಂಪು ಹಲ್ಲೆ ನಡೆಸಲು ಮತೀಯ ಕಾವಲುಪಡೆಗಳಿಗೆ ಮುಕ್ತ ಅವಕಾಶ ನೀಡಿದಂತಾಗಿದೆ. ತಮಿಳುನಾಡಿನಲ್ಲಿ 2004ರಲ್ಲಿ ಈ ಕಾಯ್ದೆಯನ್ನು ಹಿಂಪಡೆಯಲಾಯಿತು.
1950ರಲ್ಲಿ ಸಂವಿಧಾನವನ್ನು ಅನುಷ್ಟಾನಗೊಳಿಸಿದ ಸಂದರ್ಭದಲ್ಲಿ ಸಂವಿಧಾನದ ವಿಧಿ 25ರ ಅಡಿ ಪ್ರತಿಯೊಬ್ಬ ಭಾರತೀಯ ಪ್ರಜೆಗೂ ತನ್ನದೇ ಆದ ಧರ್ಮವನ್ನು ಆಯ್ಕೆ ಮಾಡಿಕೊಳ್ಳುವ, ಪಾಲಿಸುವ, ಆಚರಿಸುವ ಮತ್ತು ಪ್ರಚಾರ ಮಾಡುವ ಹಕ್ಕನ್ನು ಮಾನ್ಯ ಮಾಡಲಾಯಿತು. ಹಾಗಾಗಿ ಈ ರಾಜ ಸಂಸ್ಥಾನಗಳ ಶಾಸನಗಳು ಅನೂರ್ಜಿತವಾದವು. ಆದಾಗ್ಯೂ ಹೆಚ್ಚು ಸಂಖ್ಯೆಯ ಆದಿವಾಸಿಗಳನ್ನೊಳಗೊಂಡಿದ್ದ ಮಧ್ಯ ಪ್ರದೇಶ ಮತ್ತು ಒರಿಸ್ಸಾ ರಾಜ್ಯಗಳಲ್ಲಿ ವ್ಯಾಪಕವಾಗಿ ಕಾರ್ಯನಿರತವಾಗಿದ್ದ ಕ್ರೈಸ್ತ ಮಿಷನರಿಗಳ ಚಟುವಟಿಕೆಗಳ ಬಗ್ಗೆ ಗುಮಾನಿ ವ್ಯಕ್ತವಾಗುತ್ತಿದ್ದ ಹಿನ್ನೆಲೆಯಲ್ಲಿ ಮಧ್ಯ ಪ್ರದೇಶ ಸರ್ಕಾರವು ಮಿಷನರಿಗಳ ಕಾರ್ಯವೈಖರಿಯ ಮೇಲೆ ನಿಗಾವಹಿಸಲು ಸಮಿತಿಯೊಂದನ್ನು ನೇಮಿಸಿತ್ತು.
ಸಮಿತಿಯು ತನ್ನ ವರದಿಯಲ್ಲಿ ವಿದೇಶದಿಂದ ಹರಿದುಬರುವ ಹಣದ ಬಗ್ಗೆ ವಿಶೇಷವಾಗಿ ಪ್ರಸ್ತಾಪಿಸಿದ್ದು, ಸಮಾಜ ಸೇವೆ ಮತ್ತು ದಾನಶೀಲತೆಯ ಹೆಸರಿನಲ್ಲಿ ದುರುಪಯೋಗ ನಡೆಯಬಹುದೆಂದು ಶಂಕೆ ವ್ಯಕ್ತಪಡಿಸಿತ್ತು. ಈ ಸಮಿತಿಯ ವರದಿಯೇ ಒರಿಸ್ಸಾದ ಕಾಯ್ದೆಗೆ ತಳಹದಿಯಾಗಿ ಪರಿಣಮಿಸಿತ್ತು. ಕರ್ನಾಟಕದ ಕಾಯ್ದೆಗೂ ಇದೇ ತಳಹದಿಯಾಗಿದೆ.
ಮತಾಂಧ ಪಡೆಗಳು ಮತ್ತು ಮತಾಂತರ
ಪ್ರಸ್ತುತ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಥವಾ ಸಂಘಪರಿವಾರ ಹೇಳುವ ಮಟ್ಟಿಗೆ ಮತಾಂತರ ನಡೆಯುತ್ತಿಲ್ಲ. ಆದರೆ ಕೈಯ್ಯಲ್ಲಿ ಬೈಬಲ್ ಹಿಡಿದು ಓಡಾಡುವುದೇ ಮಹಾಪರಾಧವಾಗಿರುವುದಂತೂ ಸತ್ಯ. ಕೋಲಾರದ ಶ್ರೀನಿವಾಸಪುರದಲ್ಲಿ ಕರಪತ್ರ ಹಂಚುತ್ತಿದ್ದ ಕ್ರೈಸ್ತರ ಮೇಲೆ ಮತೀಯ ಕಾವಲುಪಡೆಗಳು ದಾಳಿ ನಡೆಸಿವೆ. ಇತ್ತೀಚೆಗೆ ಬೇಲೂರಿನಲ್ಲೂ ಪ್ರಾರ್ಥನಾ ಸಭೆಯೊಂದರ ಮೇಲೆ ದಾಳಿ ನಡೆಸಲಾಗಿತ್ತು. ಧರ್ಮ ಬೋಧನೆಗೆ ಮತ್ತು ಪ್ರಚಾರಕ್ಕೆ ಸಂವಿಧಾನದಲ್ಲಿ ಅವಕಾಶವಿದೆ.
ಈ ಬೋಧನೆಯ ಮೂಲಕ ಮತಾಂತರಕ್ಕೆ ಬಲವಂತ ಮಾಡುವುದನ್ನು ನಿರ್ಬಂಧಿಸಲಾಗಿದೆ. ಆದರೆ ಈ ಬಲವಂತದ ಮತಾಂತರದ ಅರ್ಥ ಏನೆಂದು ತಿಳಿಯಬೇಕಲ್ಲವೇ ? ಕ್ರೈಸ್ತ ಮತ ಪ್ರಚಾರಕರ ಬೋಧನೆಗೆ ಶರಣಾಗಿ ತಮ್ಮ ಮೂಲ ಮತವನ್ನು ತ್ಯಜಿಸುವವರಿಗೆ ಸಂವಿಧಾನ ಆ ಹಕ್ಕನ್ನು ನೀಡಿದೆಯಲ್ಲವೇ ? ಇದನ್ನು ನಿರ್ಬಂಧಿಸುವುದೆಂದರೆ ಅದು ಸಾಂವಿಧಾನಿಕ ವ್ಯಕ್ತಿ ಸ್ವಾತಂತ್ರ್ಯದ ಹರಣವಾಗುತ್ತದೆ.
ಆದರೆ ಕರ್ನಾಟಕದಲ್ಲಿ ಮತಾಂತರ ಪ್ರಕ್ರಿಯೆ ವ್ಯಾಪಕವಾಗಿ ನಡೆಯುತ್ತಿದೆ ಎನ್ನಲು ಯಾವುದೇ ಪುರಾವೆಗಳಿಲ್ಲ. ಕ್ರೈಸ್ತ ಧರ್ಮ ಪ್ರಚಾರಕರು ಗ್ರಾಮಗಳಲ್ಲಿ, ಆದಿವಾಸಿ ಹಾಡಿಗಳಲ್ಲಿ ತಮ್ಮ ಧರ್ಮ ಪ್ರಚಾರ ಮಾಡಿದ ಮಾತ್ರಕ್ಕೆ ಮತಾಂತರಕ್ಕೆ ಯತ್ನಿಸುತ್ತಿದ್ದಾರೆಂದು ಭಾವಿಸುವುದೂ ತರವಲ್ಲ. ಹಾಗೆ ನೋಡಿದರೆ ಧರ್ಮ ಪ್ರಚಾರ ಕಾರ್ಯವನ್ನು ಎಲ್ಲ ಧರ್ಮಗಳೂ ಕೈಗೊಳ್ಳುತ್ತವೆ. ಹಿಂದೂ ಧರ್ಮದ ಪ್ರಚಾರಕರೂ ಪ್ರವಚನಗಳನ್ನು ನೀಡುತ್ತಲೇ ಇರುತ್ತಾರೆ.
ದಿನಬೆಳಗಾದರೆ ಟಿವಿ ವಾಹಿನಿಗಳಲ್ಲಿ ಪ್ರವಚನಗಳ ಹೊಳೆಯೇ ಹರಿಯುತ್ತದೆ. ಇವೆಲ್ಲವನ್ನೂ ಮತಾಂತರದ ಪ್ರಯತ್ನಗಳೆಂದು ಭಾವಿಸಲು ಸಾಧ್ಯವೇ ? ಅಥವಾ ಕ್ರೈಸ್ತರು ಕೈಗೊಳ್ಳುವ ಪ್ರಚಾರ ಮಾತ್ರ ಮತಾಂತರ ಪ್ರೇರಿತ ಎಂದು ಭಾವಿಸಲು ಸಾಧ್ಯವೇ ? ಇನ್ನು ಮೂವತ್ತು ವರ್ಷಗಳಲ್ಲಿ ಭಾರತ ಕ್ರೈಸ್ತ ಅಥವಾ ಮುಸಲ್ಮಾನ ರಾಷ್ಟ್ರವಾಗುತ್ತದೆ, ಹಿಂದೂಗಳು ಅಲ್ಪಸಂಖ್ಯಾತರಾಗುತ್ತಾರೆ ಎಂದು ಸಂಘಪರಿವಾರ ಮೂವತ್ತು ವರ್ಷಗಳಿಂದ ಹೇಳುತ್ತಲೇ ಬರುತ್ತಿದೆ. ಹುಯಿಲೆಬ್ಬಿಸುತ್ತಿದೆ. ಪರಿವಾರದ ಅಸ್ತಿತ್ವ ಉಳಿಸಿಕೊಳ್ಳಲು ಈ ರೀತಿಯ ಪ್ರಚಾರವೂ ಒಂದು ಅಸ್ತ್ರವಷ್ಟೆ.
2011ರ ಜನಗಣತಿಯ ಪ್ರಕಾರ ಕರ್ನಾಟಕದಲ್ಲಿ ಕ್ರೈಸ್ತರ ಜನಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿದೆ. 2001ರಲ್ಲಿ ಶೇ 1.91 (11.42 ಲಕ್ಷ) ಇದ್ದುದು 2011ರಲ್ಲಿ ಶೇ 1.87 (10.09 ಲಕ್ಷ)ಕ್ಕೆ ಇಳಿದಿದೆ. ಜನಸಂಖ್ಯಾ ಪ್ರಮಾಣದ ಹೆಚ್ಚಳದ ಪ್ರಮಾಣ ಕ್ರೈಸ್ತರಲ್ಲಿ ಶೇ 15.54ರಷ್ಟಿದೆ. ಮುಸಲ್ಮಾನರ ಜನಸಂಖ್ಯೆ 2001ರಲ್ಲಿ ಶೇ 12.12ರಷ್ಟಿದ್ದುದು (64.63 ಲಕ್ಷ) 2011ರಲ್ಲಿ ಶೇ 12.91ಕ್ಕೆ (78.93 ಲಕ್ಷ) ಏರಿದೆ. ಮುಸ್ಲಿಮರ ಜನಸಂಖ್ಯಾ ಹೆಚ್ಚಳದ ಪ್ರಮಾಣ ಇದೇ ಅವಧಿಯಲ್ಲಿ ಶೇ 29.52ರಿಂದ ಶೇ 24.60ಕ್ಕೆ ಇಳಿದಿದೆ. ಅಂದರೆ ಭಾರತ ಪಾಕಿಸ್ತಾನವಾಗುತ್ತದೆ, ಮುಸ್ಲಿಮರು, ಕ್ರೈಸ್ತರು ಬಹುಸಂಖ್ಯಾತರಾಗುತ್ತಾರೆ ಎಂಬ ಹುರುಳಿಲ್ಲದ ಪ್ರಚಾರಗಳನ್ನು ಈ ಅಧಿಕೃತ ಅಂಕಿಅಂಶಗಳೇ ಅಲ್ಲಗಳೆಯುತ್ತವೆ ಅಲ್ಲವೇ ?
ಭಾರತದ ಸಂದರ್ಭದಲ್ಲಿ ಮತಾಂತರ ಎಂಬ ಪದ ಬಳಕೆಯಲ್ಲೇ ಸಮಸ್ಯೆ ಕಾಣುತ್ತದೆ. ಹಿಂದೂ ಎಂದು ಹೇಳಲಾಗುವ ಮತ ಮೂಲತಃ ಹಲವು ಜಾತಿಗಳ ಒಕ್ಕೂಟವೇ ಹೊರತು ಒಂದು ನಿರ್ದಿಷ್ಟ ಸಾಂಸ್ಥಿಕ ಸ್ವರೂಪವನ್ನು ಹೊಂದಿಲ್ಲ. ಈ ಸಾಂಸ್ಥಿಕತೆಯನ್ನು ರೂಪಿಸಲು ಸಂಘಪರಿವಾರ ಪ್ರಯತ್ನಿಸುತ್ತಿದೆ. ಅಂಬೇಡ್ಕರ್ ಮತಾಂತರಕ್ಕೆ ಎರಡು ಕಾರಣಗಳನ್ನು ನೀಡುತ್ತಾರೆ. ಮೊದಲನೆಯದು ಅಸ್ತಿತ್ವಕ್ಕೆ ಸಂಬಂಧಿಸಿದ್ದು, ಎರಡನೆಯದು ಆಧ್ಯಾತ್ಮಿಕವಾದದ್ದು. ಅಸ್ತಿತ್ವಕ್ಕೆ ಸಂಬಂಧಿಸಿದಂತೆ ದಲಿತರು ನಿತ್ಯ ಎದುರಿಸುತ್ತಿರುವ ದೌರ್ಜನ್ಯ, ತಾರತಮ್ಯ, ಅಸ್ಪೃಶ್ಯತೆಯ ಅಪಮಾನ ಮುಂತಾದುವನ್ನು ಅಂಬೇಡ್ಕರ್ ಉದಾಹರಣೆಯಾಗಿ ನೀಡುತ್ತಾರೆ. ಇದನ್ನು ಅವರು ವರ್ಗ ಸಂಘರ್ಷ ಎಂದೇ ಭಾವಿಸುತ್ತಾರೆ.
“ ಅದು ಎರಡು ವ್ಯಕ್ತಿಗಳು ಅಥವಾ ಗುಂಪುಗಳ ನಡುವಿನ ಸಂಘರ್ಷವಲ್ಲ. ಅದು ಎರಡು ವರ್ಗಗಳ ನಡುವಿನ ಸಂಘರ್ಷ. ಒಬ್ಬ ವ್ಯಕ್ತಿ ಮತ್ತೊಬ್ಬನ ಮೇಲೆ ದಬ್ಬಾಳಿಕೆ ಅಥವಾ ಅನ್ಯಾಯ ಮಾಡುವುದಲ್ಲ. ಒಂದು ವರ್ಗ ಮತ್ತೊಂದರ ಮೇಲೆ ಮಾಡುವ ಅನ್ಯಾಯ. ಈ ಸಂಘರ್ಷಗಳನ್ನು ಗಮನಿಸಿದರೆ ಒಂದು ಸಂಗತಿ ಸ್ಪಷ್ಟವಾಗುತ್ತದೆ. ನೀವು ಮೇಲ್ವರ್ಗದವರೊಡನೆ ಸಮಾನತೆಯನ್ನು ಅಪೇಕ್ಷಿಸಿದಾಗ ಸಂಘರ್ಷ ಉಂಟಾಗುತ್ತದೆ. ನೀವು ನ್ಯಾಯಕ್ಕಾಗಿ ಆಗ್ರಹಿಸುವ ನಿಮ್ಮ ವರ್ತನೆಯೇ ಅವರ ಆಕ್ರೋಶಕ್ಕೆ ಕಾರಣವಾಗುತ್ತದೆ.ಇದು ಅವರ ಅಹಂಗೆ ಚ್ಯುತಿ ಉಂಟುಮಾಡುತ್ತದೆ.” “ ಸ್ಪೃಶ್ಯರು ಮತ್ತು ಅಸ್ಪೃಶ್ಯರ ನಡುವಿನ ಸಂಘರ್ಷ ನಿರಂತರವಾದುದು, ಶಾಶ್ವತವಾದುದು, ಏಕೆಂದರೆ ಅವರ ಪ್ರಕಾರ ನಿಮಗೆ ಕೆಳಸ್ತರದ ಸ್ಥಾನ ಕಲ್ಪಿಸಿರುವ ಧರ್ಮ ಸನಾತನವಾದುದು ಅದನ್ನು ಬದಲಾಯಿಸಲಾಗುವುದಿಲ್ಲ ” ಎಂದು ಅಂಬೇಡ್ಕರ್ ಹೇಳುತ್ತಾರೆ. ಈ ಹಿನ್ನೆಲೆಯಲ್ಲೇ ಅಂಬೇಡ್ಕರ್ ದಲಿತರ ಮತಾಂತರದ ಅಪೇಕ್ಷೆಯನ್ನು ಅಸ್ತಿತ್ವದ ಸಮಸ್ಯೆ ಎಂದೇ ಗುರುತಿಸುತ್ತಾರೆ.
ಹಿಂದೂ ವ್ಯಕ್ತಿ ಮತಾಂತರ ಹೊಂದಿದರೆ ಅವರು ಜಿಗಿಯುವುದು ಮತದಿಂದದ ಮತಕ್ಕೆ ಅಲ್ಲ, ಒಂದು ಜಾತಿಯಿಂದ ಜಾತಿಯ ಸೋಂಕಿಲ್ಲದ ಮತಕ್ಕೆ. ಮರುಮತಾಂತರವಾದರೆ ಅವರು ತಮ್ಮ ಮೊದಲ ಗೂಡಿಗೇ ಮರಳಬೇಕಲ್ಲವೇ ? ಹಿಂದೂ ಮತಕ್ಕೆ ಮರಳುವವರನ್ನು ಎಲ್ಲಿ ಕೂರಿಸುತ್ತಾರೆ ? ಮತ್ತದೇ ಮೂಲ ಜಾತಿಯ ವೃಕ್ಷಗಳಡಿ ಅಲ್ಲವೇ ? ಇಲ್ಲಿ ವ್ಯಕ್ತಿಗತವಾಗಿ ತನ್ನ ಆರ್ಥಿಕ ಸ್ಥಾನಮಾನಗಳಿಗನುಗುಣವಾಗಿ ಅಸ್ಪೃಶ್ಯತೆ, ತಾರತಮ್ಯ ಎದುರಿಸದಿದ್ದರೂ ಸಾಮುದಾಯಿಕವಾಗಿ ಇದು ಇದ್ದೇ ಇರುತ್ತದೆ. ಇದನ್ನು ಹೇಗೆ ಅರ್ಥೈಸುವುದು ? ಇಂದಿಗೂ ನಮ್ಮ ಸಮಾಜವನ್ನು ಕಾಡುತ್ತಿರುವ ಅಸ್ಪೃಶ್ಯತೆಯ ಹಿನ್ನೆಲೆಯಲ್ಲಿ ಇದನ್ನು ನೋಡಿದಾಗ, ಅಸ್ಪೃಶ್ಯ ಸಮುದಾಯಗಳು ತಮ್ಮ ನೆಲೆಯನ್ನು “ ಹಿಂದೂ ” ಎಂದು ಪರಿಭಾವಿಸಲಾಗುವ ಮತದ ಚೌಕಟ್ಟಿನಲ್ಲಿ ಏಕೆ ಕಂಡುಕೊಳ್ಳಬೇಕು. ಕೊಪ್ಪಳದ ದೇವಾಲಯಕ್ಕೆ ಎಂಟು ವರ್ಷದ ಹಸುಳೆ ಪ್ರವೇಶಿಸಿದ್ದಕ್ಕೆ ಬಹಿಷ್ಕಾರ ಹಾಕಿ ದಂಡ ವಿಧಿಸಿದ ಒಂದು ಸಮಾಜಕ್ಕೆ, ಅದೇ ಅಸ್ಪೃಶ್ಯರನ್ನು ನಮ್ಮೊಡನೆ ಇರಿ ಎಂದು ಹೇಳುವ ನೈತಿಕತೆ ಹೇಗಿರಲು ಸಾಧ್ಯ ?
ಅಸ್ಪೃಶ್ಯತೆ, ಜಾತಿ ದೌರ್ಜನ್ಯ, ತಾರತಮ್ಯ ಮತ್ತು ಅಪಮಾನಗಳಿಂದ ವಿಮುಕ್ತಿ ಪಡೆಯುವ ಒಂದು ಸಾರ್ವತ್ರಿಕ ಪ್ರಕ್ರಿಯೆಯಾಗಿ ಮತಾಂತರವೂ ನಡೆಯುತ್ತದೆ. ಹಾಗಾಗಿಯೇ ನಮ್ಮ ಸಂವಿಧಾನದಲ್ಲೂ ಇದಕ್ಕೆ ನಿರ್ಬಂಧಿತ ಅವಕಾಶವನ್ನು ಕಲ್ಪಿಸಲಾಗಿದೆ. ಬಲವಂತದ ಮತಾಂತರ, ಆಮಿಷ ಪ್ರಲೋಭನೆಗಳ ಮೂಲಕ ಮಾಡುವ ಮತಾಂತರವನ್ನು ನಿಷೇಧಿಸುವ ಮುನ್ನ ಸರ್ಕಾರ ಈ ಪದಗಳ ವ್ಯಾಪ್ತಿ ಮತ್ತು ಸ್ಪಷ್ಟವಾದ ಅರ್ಥವನ್ನು ಜನತೆಗೆ ತಿಳಿಸಬೇಕಿದೆ.
ಅವಕಾಶವಂಚಿತರಿಗೆ ಶಿಕ್ಷಣ ನೀಡುವುದು, ಹಸಿದವರಿಗೆ ಅನ್ನ ನೀಡುವುದು, ನೆಲೆಯಿಲ್ಲದವರಿಗೆ ಸೂರು ಒದಗಿಸುವುದು ಆಮಿಷ ಎನಿಸಿಕೊಳ್ಳುವುದಿಲ್ಲ. ಮತ ಮತ್ತು ಧರ್ಮಗಳ ಪರಿಧಿಯಿಂದಾಚೆಗೆ ಇವು ಮಾನವೀಯ ಸಂವೇದನೆಯ ಮಾರ್ಗಗಳಾಗುತ್ತವೆ. ಬಿಜೆಪಿ ಸರ್ಕಾರ ಈ ಪದಗಳ ನಿಷ್ಕರ್ಷೆಯ ಅಧಿಕಾರವನ್ನು ಭಜರಂಗದಳ, ಹಿಂದೂ ಸೇನೆಯಂತ ಮತೀಯ ಕಾವಲುಪಡೆಗಳಿಗೆ ನೀಡುವ ಮೂಲಕ ಅಲ್ಪಸಂಖ್ಯಾತರ ಮೇಲೆ ದಾಳಿ ನಡೆಸುವ ಮುಕ್ತ ಅವಕಾಶವನ್ನು ಕಲ್ಪಿಸಿದೆ.
ಈಗ ರಾಜ್ಯ ಸಂಸ್ಕೃತಿ ಇಲಾಖೆಯ ಸಚಿವರು ಲವ್ ಜಿಹಾದ್ ನಿಷೇಧ ಮಸೂದೆಯನ್ನೂ ಮಂಡಿಸುವುದಾಗಿ ಹೇಳಿದ್ದಾರೆ. ಲವ್ ಜಿಹಾದ್ ಒಂದು ಕಪೋಲ ಕಲ್ಪಿತ ಪರಿಕಲ್ಪನೆ ಎಂದು ನ್ಯಾಯಾಲಯಗಳೇ ಹೇಳಿವೆ. ಎರಡು ವಿಭಿನ್ನ ಮತಗಳ ಯುವಕ-ಯುವತಿ ಒಟ್ಟೊಟ್ಟಿಗೆ ಓಡಾಡುವುದೂ ಕಷ್ಟವಾಗುವಂತಹ ಪರಿಸ್ಥಿತಿ ಕರಾವಳಿಯಲ್ಲಿ ಉದ್ಭವಿಸಿದೆ. ಮುಸ್ಲಿಂ ಮತಾಂಧರೂ ಸಹ ಇಂತಹ ದಾಳಿಗಳನ್ನು ನಡೆಸುತ್ತಿದ್ದಾರೆ. ಜಾತಿ, ಮತ, ಧರ್ಮ ಮತ್ತು ಸಾಮುದಾಯಿಕ ಅಸ್ಮಿತೆಗಳನ್ನು ದಾಟಿದ ಮನುಜ ಸಂಬಂಧವೂ ಒಂದಿದೆ ಎಂಬ ಸಾಮಾನ್ಯ ಪರಿಜ್ಞಾನವನ್ನೂ ಕಳೆದುಕೊಂಡಿರುವ ಒಂದು ಸಮಾಜದಲ್ಲಿ ಮಾತ್ರ ಈ ರೀತಿಯ ಘಟನೆಗಳು ಸಂಭವಿಸಲು ಸಾಧ್ಯ. 12ನೆಯ ಶತಮಾನದ ಬಸವಣ್ಣನ ಕಾಲದಲ್ಲಿದ್ದ ಅಸ್ಪೃಶ್ಯತೆ ಮತ್ತು ಜಾತಿ ದೌರ್ಜನ್ಯ ಅಪಮಾನಗಳು ಇಂದಿಗೂ ಪ್ರಚಲಿತವಾಗಿವೆ ಎಂದರೆ ನಾವು ನಾಚಿಕೆಯಿಂದ ತಲೆತಗ್ಗಿಸಬೇಕಲ್ಲವೇ ? ಅಂದು ನಡೆದ ಮತಾಂತರದ ಪ್ರಕ್ರಿಯೆಯೇ ಇಂದೂ ನಡೆಯುತ್ತಿದೆ ಎಂದರೆ ಅದನ್ನು ಒಪ್ಪಿಕೊಳ್ಳಬೇಕಲ್ಲವೇ ?
ವಿಶ್ವದ ಶ್ರೇಷ್ಠ ಸಂವಿಧಾನವನ್ನು ಹೊಂದಿರುವ ಭಾರತದಲ್ಲಿ ಅಸ್ಪೃಶ್ಯತೆಯಂತಹ ಅಮಾನುಷ ಆಚರಣೆಯನ್ನು ಇನ್ನೂ ಜೀವಂತವಾಗಿರಿಸಿರುವ ಭಾರತೀಯ ಸಮಾಜ ಮನುಜ ಸಂಬಂಧಗಳನ್ನು ಜಾತಿ-ಮತ-ಧರ್ಮದ ಹಂಗಿಲ್ಲದೆ ಬೆಸೆಯುವ ನಿಟ್ಟಿನಲ್ಲಿ ಮುನ್ನಡೆಯುವ ಸಂಕಲ್ಪ ಮಾಡಬೇಕಿದೆ. ಆದರೆ ಮತಾಂತರ ನಿಷೇಧದಂತಹ ಅಸಾಂವಿಧಾನಿಕ ಶಾಸನಗಳನ್ನು ಜಾರಿಗೊಳಿಸುವ ಮೂಲಕ ಬಿಜೆಪಿ ಸರ್ಕಾರಗಳು ಈ ಮುನ್ನಡೆಯ ಹಾದಿಗಳಿಗೆ ಮುಳ್ಳು ಬೇಲಿಗಳನ್ನು ನಿರ್ಮಿಸುತ್ತಿದೆ. ನಮ್ಮ ಸಂವಿಧಾನದ ಶ್ರೇಷ್ಠತೆ ಇರುವುದು ಈ ಸಮನ್ವಯ ಮತ್ತು ಸೌಹಾರ್ದತೆಯಲ್ಲಿ, ಇದನ್ನು ಕಾಪಾಡಲು ಮತ ಮತ್ತು ಧರ್ಮ ನಿಮಿತ್ತ ಮಾತ್ರ, ಮಾನವೀಯ ಸ್ಪಂದನೆ ಮತ್ತು ನೈತಿಕ ಮೌಲ್ಯಗಳು ಮುಖ್ಯವಾಗುತ್ತವೆ. ಹಿಂದೂ ಎನ್ನಲಾಗುವ ಮತಾಚರಣೆಯಲ್ಲಿ ಮತ್ತು ವೈದಿಕಶಾಹಿಯ ಧಾರ್ಮಿಕ ಚಿಂತನೆಗಳಲ್ಲಿ ಈ ಮನುಜ ಕೇಂದ್ರಿತ ನೈತಿಕತೆ ಇಲ್ಲದ ಹೊರತು ಮತಾಂತರವನ್ನು ನಿರ್ಬಂಧಿಸುವ ನೈತಿಕ ಹಕ್ಕೂ ಇರುವುದಿಲ್ಲ.
ಮತೀಯ ಸೌಹಾರ್ದತೆಯ ಸಹಬಾಳ್ವೆಯ ಹಾದಿಗಳನ್ನು ಹಾಳುಗೆಡಹುವ ಮತಾಂಧ ಶಕ್ತಿಗಳಿಗೆ ಮತ್ತಷ್ಟು ಪ್ರಚೋದನ ನೀಡುವ ಮತಾಂತರ ನಿಷೇಧ ಕಾಯ್ದೆ ಅಸಾಂವಿಧಾನಿಕವಷ್ಟೇ ಅಲ್ಲ, ಅನೈತಿಕವೂ ಹೌದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.
ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.
ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.
ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.
ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ
ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.
ಕನ್ನಡಿಗರ ಮನದ ಜಾನಕಿ
ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.
ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.
ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.
ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.
ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ
ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.
ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.
ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.
ಧ್ವನಿಯೊಳಗಿದ್ದ ಸಾವಿರ ರೂಪಗಳು
ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.
ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ
ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.
ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.
ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ
ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.
ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.
ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ
ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.
ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.
ಸರಳತೆಯೇ ಅವರ ಅಲಂಕಾರ
ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.
ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ
ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.
ಸಂಗೀತ ಲೋಕದ ಕಂಬನಿ
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.
ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ
ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.
ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.
ಸ್ವರ ಮೌನವಾದರೂ…
ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.
ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.
ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.
ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ
ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಮಹತ್ವದ ಜವಾಬ್ದಾರಿಯನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ನೀಡಿದೆ.
ಈ ನೇಮಕ ಕೇವಲ ಸಂಘಟನಾತ್ಮಕ ಬದಲಾವಣೆಯಲ್ಲ. ಕರ್ನಾಟಕ ಕಾಂಗ್ರೆಸ್ನ ಮುಂದಿನ ರಾಜಕೀಯ ದಿಕ್ಕು, ಪಕ್ಷದ ಒಳಾಂಗಣ ಸಮತೋಲನ ಮತ್ತು ಭವಿಷ್ಯದ ಚುನಾವಣಾ ತಂತ್ರಗಳಿಗೆ ಇದು ಪ್ರಮುಖ ಸೂಚನೆಯಾಗಿದೆ. ಹಲವು ದಶಕಗಳ ರಾಜಕೀಯ ಅನುಭವ, ಸಂಘಟನಾ ಕೌಶಲ್ಯ ಮತ್ತು ಹೈಕಮಾಂಡ್ಗೆ ನಿಕಟ ಸಂಪರ್ಕ ಹೊಂದಿರುವ ಹರಿಪ್ರಸಾದ್ ಅವರು ಈಗ ರಾಜ್ಯ ಕಾಂಗ್ರೆಸ್ನ ನೂತನ ಸಾರಥಿಯಾಗಿ ಹೊರಹೊಮ್ಮಿದ್ದಾರೆ.
ಆರಂಭಿಕ ಜೀವನ ಮತ್ತು ಶಿಕ್ಷಣ
ಬಿ.ಕೆ. ಹರಿಪ್ರಸಾದ್ ಅವರು 1954ರ ಜುಲೈ 29ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಎ. ಕೆಂಪಯ್ಯ ಹಾಗೂ ತಾಯಿ ಕೆ. ಗುಣಾವತಿ. ಬಾಲ್ಯದಿಂದಲೇ ಸಾಮಾಜಿಕ ಮತ್ತು ರಾಜಕೀಯ ಚಟುವಟಿಕೆಗಳತ್ತ ಆಸಕ್ತಿ ಹೊಂದಿದ್ದ ಅವರು ಬೆಂಗಳೂರಿನ ಎಂ.ಇ.ಎಸ್. ಕಾಲೇಜಿನಲ್ಲಿ ಬಿ.ಕಾಂ ಪದವಿ ಶಿಕ್ಷಣ ಪಡೆದರು. ವಿದ್ಯಾರ್ಥಿ ಜೀವನದಲ್ಲಿಯೇ ಕಾಂಗ್ರೆಸ್ ಚಟುವಟಿಕೆಗಳೊಂದಿಗೆ ಗುರುತಿಸಿಕೊಂಡ ಅವರು ಮುಂದೆ ಪೂರ್ಣಾವಧಿ ರಾಜಕಾರಣಿಯಾಗಿ ಬೆಳೆದರು.
ವಿದ್ಯಾರ್ಥಿ ರಾಜಕಾರಣದಿಂದ ರಾಷ್ಟ್ರೀಯ ಮಟ್ಟದ ನಾಯಕತ್ವದವರೆಗೆ
ಹರಿಪ್ರಸಾದ್ ಅವರ ರಾಜಕೀಯ ಬದುಕು ವಿದ್ಯಾರ್ಥಿ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಸಂಘಟನೆಗಳಿಂದ ಆರಂಭವಾಯಿತು. ಸಂಘಟನಾ ರಾಜಕಾರಣದಲ್ಲಿ ತೋರಿದ ಸಾಮರ್ಥ್ಯದಿಂದ ಅವರು ಶೀಘ್ರದಲ್ಲೇ ಪಕ್ಷದ ಹಿರಿಯ ನಾಯಕರ ಗಮನ ಸೆಳೆದರು.
ರಾಜ್ಯ ಮಟ್ಟದಲ್ಲಿ ಮಾತ್ರವಲ್ಲದೆ ರಾಷ್ಟ್ರೀಯ ಮಟ್ಟದಲ್ಲೂ ಕಾಂಗ್ರೆಸ್ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ ಅವರು, ಹಲವು ರಾಜ್ಯಗಳ ಕಾಂಗ್ರೆಸ್ ವ್ಯವಹಾರಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಹೈಕಮಾಂಡ್ನೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ನಾಯಕರಲ್ಲಿ ಹರಿಪ್ರಸಾದ್ ಪ್ರಮುಖರು ಎಂದು ಪರಿಗಣಿಸಲಾಗುತ್ತದೆ.
ಬಿ.ಕೆ. ಹರಿಪ್ರಸಾದ್ ಅವರು ಹಲವು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. 1990ರಿಂದಲೇ ಅವರು ರಾಷ್ಟ್ರೀಯ ರಾಜಕಾರಣದಲ್ಲಿ ಸಕ್ರಿಯ ಪಾತ್ರ ವಹಿಸುತ್ತಾ ಬಂದಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪರವಾಗಿ ಹಲವು ವಿಷಯಗಳ ಬಗ್ಗೆ ಧ್ವನಿ ಎತ್ತಿದ ಅವರು ಸಂಸತ್ತಿನ ಚರ್ಚೆಗಳಲ್ಲಿ ಗಮನ ಸೆಳೆದಿದ್ದರು.
ಅವರು ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಒಕ್ಕೂಟದ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ಆ ಸಂದರ್ಭದಲ್ಲಿ ಎನ್ಡಿಎ ಅಭ್ಯರ್ಥಿ ಹರಿವಂಶ್ ನಾರಾಯಣ್ ಸಿಂಗ್ ವಿರುದ್ಧ ಪೈಪೋಟಿ ನಡೆಸಿದ್ದರು. ಸೋಲು ಕಂಡಿದ್ದರೂ ರಾಷ್ಟ್ರೀಯ ರಾಜಕೀಯದಲ್ಲಿ ಅವರ ಸ್ಥಾನಮಾನ ಮತ್ತಷ್ಟು ಬಲವತ್ತಾಯಿತು.
1999ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿಯ ಹಿರಿಯ ನಾಯಕ ಅನಂತ್ ಕುಮಾರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಜಯ ಸಾಧಿಸಲು ಸಾಧ್ಯವಾಗದಿದ್ದರೂ ಅವರು ಕಾಂಗ್ರೆಸ್ನ ಪ್ರಮುಖ ಮುಖವಾಗಿ ಗುರುತಿಸಿಕೊಂಡರು.
ಸಂಘಟನಾ ರಾಜಕಾರಣದಲ್ಲಿ ಹೆಚ್ಚು ಸಕ್ರಿಯರಾಗಿದ್ದ ಕಾರಣ, ಚುನಾವಣಾ ಗೆಲುವಿಗಿಂತ ಪಕ್ಷ ನಿರ್ಮಾಣದಲ್ಲಿ ಅವರ ಪಾತ್ರವೇ ಹೆಚ್ಚು ಗಮನ ಸೆಳೆಯಿತು.
ಕಾಂಗ್ರೆಸ್ ಸಂಘಟನೆಯಲ್ಲಿ ‘ಟಾಸ್ಕ್ ಮಾಸ್ಟರ್’
ಕಾಂಗ್ರೆಸ್ ಪಕ್ಷದಲ್ಲಿ ಹರಿಪ್ರಸಾದ್ ಅವರನ್ನು ಸಂಘಟನಾ ತಜ್ಞ ಎಂದು ಕರೆಯಲಾಗುತ್ತದೆ. ಪಕ್ಷ ಎದುರಿಸಿದ ಸಂಕಷ್ಟದ ಸಂದರ್ಭಗಳಲ್ಲಿ ಹಲವು ರಾಜ್ಯಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿ ಸಂಘಟನೆಯನ್ನು ಬಲಪಡಿಸಿದ ಅನುಭವ ಅವರಿಗೆ ಇದೆ.
ಇತ್ತೀಚಿನ ಅವಧಿಯಲ್ಲಿ ಅವರು ಹರಿಯಾಣ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯ ರಾಜಕೀಯದ ಸೂಕ್ಷ್ಮ ಸಮೀಕರಣಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಮತ್ತು ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಸಾಧಿಸುವ ಶೈಲಿ ಅವರ ವಿಶೇಷತೆ ಎಂದು ಪಕ್ಷದ ನಾಯಕರು ಹೇಳುತ್ತಾರೆ.
ಕರ್ನಾಟಕ ಕಾಂಗ್ರೆಸ್ನಲ್ಲಿ ಹರಿಪ್ರಸಾದ್ ಅವರು ಹಲವು ದಶಕಗಳಿಂದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳ ಸಂದರ್ಭದಲ್ಲೂ ಅವರು ಸಮತೋಲನ ಸಾಧಿಸುವ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.
ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅವರು, 2022 ರಿಂದ 2023ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸರ್ಕಾರದ ನೀತಿಗಳ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸುವ ಮೂಲಕ ಅವರು ಗಮನ ಸೆಳೆದಿದ್ದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ
2026ರಲ್ಲಿ ಕರ್ನಾಟಕ ರಾಜಕೀಯದಲ್ಲಿ ನಡೆದ ನಾಯಕತ್ವ ಬದಲಾವಣೆಯ ಬಳಿಕ ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ. ಶಿವಕುಮಾರ್ ವಹಿಸಿಕೊಂಡರು. ಇದರ ಪರಿಣಾಮವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಪಕ್ಷದೊಳಗೆ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದರೂ ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿತು.
ಈ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹೈಕಮಾಂಡ್ ಸಂಘಟನಾ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿ ಪರಿಗಣಿಸಿದೆ. ಪಕ್ಷದ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮತೋಲನ ಕಾಯ್ದುಕೊಳ್ಳಲು ಹರಿಪ್ರಸಾದ್ ಅವರ ಅನುಭವ ನೆರವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಹಿಂದೆ ಹಲವು ರಾಜಕೀಯ ಕಾರಣಗಳಿವೆ. ಮೊದಲನೆಯದಾಗಿ, ಅವರು ಯಾವುದೇ ಒಂದು ಗುಂಪಿಗೆ ಸೀಮಿತವಾಗದ ನಾಯಕ ಎಂಬ ಚಿತ್ರಣ ಹೊಂದಿದ್ದಾರೆ. ಎರಡನೆಯದಾಗಿ, ಸಂಘಟನಾ ಅನುಭವ ಅಪಾರವಾಗಿದೆ. ಮೂರನೆಯದಾಗಿ, ಹೈಕಮಾಂಡ್ಗೆ ಅತ್ಯಂತ ವಿಶ್ವಾಸಾರ್ಹ ನಾಯಕರಲ್ಲಿ ಒಬ್ಬರು. ನಾಲ್ಕನೆಯದಾಗಿ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳು ಮತ್ತು ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಾಮರ್ಥ್ಯ ಅವರಿಗಿದೆ ಎಂದು ಕಾಂಗ್ರೆಸ್ ನಾಯಕತ್ವ ನಂಬಿದೆ.
ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಅವರ ಮುಂದಿರುವ ಸವಾಲುಗಳು ಸಣ್ಣದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಸಂಘಟನೆಯನ್ನು ಸದೃಢವಾಗಿಡುವುದು ದೊಡ್ಡ ಜವಾಬ್ದಾರಿ. ಕಾರ್ಯಕರ್ತರ ಅಸಮಾಧಾನ, ಸಚಿವ ಸ್ಥಾನಾಕಾಂಕ್ಷಿಗಳ ಒತ್ತಡ, ಪ್ರಾದೇಶಿಕ ಸಮೀಕರಣಗಳು ಮತ್ತು ಜಾತಿ ಆಧಾರಿತ ರಾಜಕೀಯ ಬೇಡಿಕೆಗಳನ್ನು ಸಮತೋಲನಗೊಳಿಸಬೇಕಾಗಿದೆ.
ಇದರ ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಸಂಘಟನೆಯನ್ನು ನಿರಂತರ ಚಟುವಟಿಕೆಯಲ್ಲಿ ಇರಿಸುವುದು ಅವರ ಪ್ರಮುಖ ಗುರಿಯಾಗಲಿದೆ.
ಹರಿಪ್ರಸಾದ್ ಅವರು ಹೆಚ್ಚು ಪ್ರಚಾರಪ್ರಿಯ ರಾಜಕಾರಣಿಯಲ್ಲ. ಸಂಘಟನೆಯೊಳಗೆ ಕೆಲಸ ಮಾಡುವ ನಾಯಕ ಎಂಬ ಹೆಗ್ಗಳಿಕೆ ಅವರಿಗೆ ಇದೆ. ಕಾರ್ಯಕರ್ತರೊಂದಿಗೆ ನೇರ ಸಂಪರ್ಕ, ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಮತ್ತು ತಾಳ್ಮೆಯ ರಾಜಕೀಯ ಅವರ ಕಾರ್ಯಶೈಲಿಯ ಮುಖ್ಯ ಲಕ್ಷಣಗಳು.
ಅವರ ರಾಜಕೀಯ ಜೀವನದಲ್ಲಿ ಅನೇಕ ಏರಿಳಿತಗಳು ಬಂದಿದ್ದರೂ ಪಕ್ಷದ ಮೇಲಿನ ನಿಷ್ಠೆ ಪ್ರಶ್ನಾತೀತವಾಗಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಹಲವು ಬಾರಿ ಅವರಿಗೆ ಪ್ರಮುಖ ಜವಾಬ್ದಾರಿಗಳನ್ನು ನೀಡಿದೆ.
ರಾಜಕೀಯದ ಜೊತೆಗೆ ಸರಳ ಜೀವನಶೈಲಿಗೆ ಹೆಸರುವಾಸಿಯಾಗಿರುವ ಹರಿಪ್ರಸಾದ್ ಅವರು ಉಷಾ ಅವರೊಂದಿಗೆ ದಾಂಪತ್ಯ ಜೀವನ ನಡೆಸುತ್ತಿದ್ದಾರೆ. ಅವರಿಗೆ ಒಬ್ಬ ಪುತ್ರಿಯಿದ್ದಾರೆ. ಕುಟುಂಬ ಜೀವನವನ್ನು ರಾಜಕೀಯದಿಂದ ಸಾಧ್ಯವಾದಷ್ಟು ದೂರ ಇಡುವ ನಾಯಕ ಎಂಬ ಹೆಸರನ್ನು ಅವರು ಗಳಿಸಿದ್ದಾರೆ.
ಭವಿಷ್ಯದ ರಾಜಕೀಯ ಪಾತ್ರ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಹರಿಪ್ರಸಾದ್ ಅವರ ರಾಜಕೀಯ ಜೀವನದ ಮತ್ತೊಂದು ಮಹತ್ವದ ಅಧ್ಯಾಯವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮನ್ವಯ ಸಾಧಿಸುವಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ.
ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ತಂತ್ರ ರೂಪಿಸುವುದು, ಕಾರ್ಯಕರ್ತರ ಬಲವರ್ಧನೆ, ಚುನಾವಣಾ ಸಿದ್ಧತೆ ಮತ್ತು ಹೈಕಮಾಂಡ್ನೊಂದಿಗೆ ಸಮನ್ವಯ ಸಾಧಿಸುವ ಪ್ರಮುಖ ಹೊಣೆಗಾರಿಕೆ ಅವರ ಮೇಲಿದೆ. ಈ ಎಲ್ಲ ಸವಾಲುಗಳನ್ನು ಅವರು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಕರ್ನಾಟಕ ಕಾಂಗ್ರೆಸ್ನ ಮುಂದಿನ ರಾಜಕೀಯ ಭವಿಷ್ಯ ಬಹುಮಟ್ಟಿಗೆ ಅವಲಂಬಿತವಾಗಿದೆ.
ಸುಮಾರು ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಕಾಂಗ್ರೆಸ್ ಸಂಘಟನೆಯಲ್ಲಿ ದುಡಿದಿರುವ ಬಿ.ಕೆ. ಹರಿಪ್ರಸಾದ್ ಇಂದು ಕರ್ನಾಟಕ ಕಾಂಗ್ರೆಸ್ನ ಅತ್ಯುನ್ನತ ಸಂಘಟನಾ ಹುದ್ದೆಯನ್ನು ಅಲಂಕರಿಸಿದ್ದಾರೆ. ವಿದ್ಯಾರ್ಥಿ ರಾಜಕಾರಣದಿಂದ ಆರಂಭವಾದ ಅವರ ಪಯಣ ರಾಜ್ಯಸಭೆ, ರಾಷ್ಟ್ರೀಯ ಸಂಘಟನೆ, ವಿಧಾನ ಪರಿಷತ್ ಮತ್ತು ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನವರೆಗೆ ತಲುಪಿದೆ.
ಅನುಭವ, ಸಂಘಟನಾ ಕೌಶಲ್ಯ, ರಾಜಕೀಯ ಪ್ರೌಢಿಮೆ ಮತ್ತು ಪಕ್ಷದ ಮೇಲಿನ ನಿಷ್ಠೆ ಎಂಬ ನಾಲ್ಕು ಅಂಶಗಳು ಅವರ ರಾಜಕೀಯ ವ್ಯಕ್ತಿತ್ವದ ಪ್ರಮುಖ ಗುರುತುಗಳಾಗಿವೆ. ಕರ್ನಾಟಕ ಕಾಂಗ್ರೆಸ್ ಹೊಸ ರಾಜಕೀಯ ಹಾದಿಯಲ್ಲಿ ಸಾಗುತ್ತಿರುವ ಈ ಸಂದರ್ಭದಲ್ಲಿ, ಬಿ.ಕೆ. ಹರಿಪ್ರಸಾದ್ ಅವರ ನಾಯಕತ್ವ ಪಕ್ಷಕ್ಕೆ ಹೊಸ ಶಕ್ತಿ ತುಂಬುತ್ತದೆಯೇ ಎಂಬುದನ್ನು ರಾಜ್ಯದ ರಾಜಕೀಯ ಕುತೂಹಲದಿಂದ ಗಮನಿಸುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243



