ದಿನದ ಸುದ್ದಿ
ಮಾಯಕೊಂಡ ಗುಡ್ಡದಹಳ್ಳಿಗೆ ಕೆ.ಎಸ್.ಆರ್.ಟಿ.ಸಿ.ಬಸ್ ಸೌಕರ್ಯ: ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
ಸುದ್ದಿದಿನ,ದಾವಣಗೆರೆ:ಮಕ್ಕಳ ಭವಿಷ್ಯ ಉಜ್ವಲವಾಗಲು ಅವರಿಗೆ ಸರಿಯಾದ ಶಿಕ್ಷಣ ಲಭಿಸಿ ಉತ್ತಮ ಆರೋಗ್ಯ ಸಂರಕ್ಷಣೆ ಸಿಕ್ಕಾಗ ಅವರ ಸಂಪೂರ್ಣ ಅಭಿವೃದ್ದಿಯಾಗಲಿದೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕ್ಷೇತ್ರ ಸಂಚರಿಸಿ ಶಾಲೆ, ಗ್ರಾಮದ ಮೂಲಭೂತ ಸೌಕರ್ಯದ ಕಡೆ ಹೆಚ್ಚು ಗಮನಿಸುತ್ತೇನೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು.
ಅವರು ಮಾಯಕೊಂಡ ಕ್ಷೇತ್ರದ ಗುಡ್ಡದಹಟ್ಟಿಯಲ್ಲಿ ಕೆ.ಎಸ್.ಆರ್.ಟಿ.ಸಿ.ಯಿಂದ ನೂತನ ಬಸ್ ಸಂಚಾರಕ್ಕೆ ಚಾಲನೆ ನೀಡಿ ಸಮಾರಂಭದಲ್ಲಿ ಮಾತನಾಡಿದರು. ಗ್ರಾಮೀಣ ಭಾಗದಲ್ಲಿನ ಮಕ್ಕಳಿಗೆ ಸರಿಯಾದ ರೀತಿಯಲ್ಲಿ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಶಿಕ್ಷಣ ಸಿಗಬೇಕು. ಇದು ಲಭಿಸಿದಾಗ ಅವರ ಶಿಕ್ಷಣಕ್ಕೆ ಸರಿಯಾದ ಅಡಿಪಾಯ ಹಾಕಿದಂತಾಗುತ್ತದೆ. ಇದರ ಜೊತೆಗೆ ಗ್ರಾಮೀಣ ಪ್ರದೇಶದ ಮಕ್ಕಳು ಸೇರಿದಂತೆ ಜನರಿಗೆ ಆರೋಗ್ಯ ಸೌಕರ್ಯಗಳು ಸಿಗಬೇಕೆಂದು ತಿಳಿಸಿದರು.
ಸರ್ಕಾರಿ ಶಾಲೆಯಲ್ಲಿ ಮೂಲಭೂತ ಸೌಕರ್ಯ ಇನ್ನೂ ಅಗತ್ಯವಾಗಿದೆ, ಸರ್ಕಾರಿ ಶಾಲೆಯಲ್ಲಿ ಓದಿದವರು ಅನೇಕ ಉನ್ನತ ಹುದ್ದೆ, ಸ್ಥಾನದಲ್ಲಿದ್ದಾರೆ. ಈ ಎಲ್ಲಾ ಹಳೆ ವಿದ್ಯಾರ್ಥಿಗಳನ್ನು ಒಂದುಗೂಡಿಸಿ ಶಾಲಾಭಿವೃದ್ದಿ ಮಾಡಲು ಎಸ್.ಡಿ.ಎಂ.ಸಿ.ಯವರು ಹಳೆ ವಿದ್ಯಾರ್ಥಿಗಳ ಸಂಘ ಸ್ಥಾಪನೆ ಮಾಡುವ ಮೂಲಕ ಅವರಿಂದ ಆರ್ಥಿಕ ಸಹಕಾರ, ಸಲಹೆಗಳನ್ನು ಪಡೆದು ತಮ್ಮ ಶಾಲೆಯ ಕೊಠಡಿ, ಶಾಲಾಭಿವೃದ್ದಿ ಮಾಡಬಹುದಾಗಿದೆ. ಸರ್ಕಾರಿ ಶಾಲೆಯ ಶಿಕ್ಷಕರು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ ಹೊಂದುವುದರಿಂದ ಇವರು ಉತ್ತಮ ಶಿಕ್ಷಕರಾಗಿರುವರು. ಶಿಕ್ಷಕರ ಸದ್ಬಳಕೆಯಿಂದ ಮಕ್ಕಳ ಶೈಕ್ಷಣಿಕ ಅಭಿವೃದ್ದಿ ಮತ್ತು ಶಾಲೆಯ ಮೂಲಭೂತ ಸೌಕರ್ಯದ ಅಭಿವೃದ್ದಿ ಮಾಡುವಲ್ಲಿ ಗ್ರಾಮಸ್ಥರ ಪಾತ್ರ ಬಹಳ ಮುಖ್ಯವಾಗಿರುತ್ತದೆ ಎಂದರು.
ಕ್ಷೇತ್ರದ ಜನರ ಹಾಗೂ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಲು ದಾವಣಗೆರೆ ಜಿಲ್ಲಾಡಳಿತ ಭವನದಲ್ಲಿ ಸಂಸದರ ಕಚೇರಿಯನ್ನು ಆರಂಭಿಸಲಾಗಿದ್ದು ಜನರು ಇಲ್ಲಿಗೆ ಬಂದು ಯಾವುದೇ ಹಿಂಜರಿಕೆ ಇಲ್ಲದೆ ತಮ್ಮ ಕುಂದುಕೊರತೆಗಳ ಅಹವಾಲುಗಳನ್ನು ನೀಡಬಹುದಾಗಿದೆ. ಮುಂದಿನ ದಿನಗಳಲ್ಲಿ ನಾನು ಸಹ ದಾವಣಗೆರೆಯಲ್ಲಿರದೆ ಕ್ಷೇತ್ರದಲ್ಲಿ ಸಂಚರಿಸುವ ಮೂಲಕ ಜನರ ಅಹವಾಲುಗಳನ್ನು ಆಲಿಸಿ ಪರಿಹಾರಿಸಲಾಗುತ್ತದೆ ಎಂದರು.
ಗುಡ್ಡದಹಳ್ಳಿಗೆ ಬಸ್ ಬೇಡಿಕೆ ಸಾಕಷ್ಟು ದಿನಗಳಿಂದ ಇದ್ದು ಇದನ್ನು ಪರಿಹರಿಸಲಾಗಿದೆ. ಮಾಯಕೊಂಡ ರಸ್ತೆ ಅಭಿವೃದ್ದಿಯಾಗಬೇಕೆಂದು ಜನರು ಕೇಳುತ್ತಿದ್ದು ರಸ್ತೆ ನಿರ್ಮಾಣಕ್ಕೆ ರೂ.8 ಕೋಟಿ ಮಂಜೂರಾಗಿದ್ದು ಮುಂದಿನ ದಿನಗಳಲ್ಲಿ ಕೆಲಸ ಪ್ರಾರಂಭವಾಗಲಿದೆ ಎಂದರು.
ಮಾಯಕೊಂಡ ಶಾಸಕರಾದ ಕೆ.ಎಸ್.ಬಸವಂತಪ್ಪ ಮಾತನಾಡಿ ಗುಡ್ಡದಹಳ್ಳಿ ತಾಲ್ಲೂಕಿನ ಕೊನೆಯ ಭಾಗದಲ್ಲಿದ್ದು ಇಲ್ಲಿಗೆ ಬಸ್ ಸಂಪರ್ಕವಿಲ್ಲದೆ ಜನರಿಗೆ ಸಾಕಷ್ಟು ಅನಾನುಕೂಲವಾಗಿತ್ತು. ಬಸ್ ಸೌಕರ್ಯ ಕಲ್ಪಿಸಿದ್ದರಿಂದ ಗ್ರಾಮದಲ್ಲಿ ಹಬ್ಬದ ವಾತಾವರಣ ಮೂಡಿದೆ. ಭಾವಿಹಾಳ್ ಮೂಲಕ ಗುಡ್ಡದಹಳ್ಳಿ, ನರಗÀನಹಳ್ಳಿ ಮೂಲಕ ದಾವಣಗೆರೆಗೆ ಪ್ರಯಾಣಿಸಬಹುದು. ಈ ಬಸ್ ಗ್ರಾಮಕ್ಕೆ ಬೆಳಗ್ಗೆ 8.45 ಕ್ಕೆ ಬರಲಿದ್ದು ಮಧ್ಯಾಹ್ನ 1.30 ಕ್ಕೆ ದಾವಣಗೆರೆಯಿಂದ ಗ್ರಾಮಕ್ಕೆ ಮತ್ತು ಸಂಜೆ 4 ಗಂಟೆಗೆ ದಾವಣಗೆರೆಯಿಂದ ಬಾವಿಹಾಳ್ ಮಾರ್ಗವಾಗಿ ಗುಡ್ಡದಹಳ್ಳಿ ತಲುಪಲಿದೆ. ಶಾಲಾ, ಕಾಲೇಜಿನ ವಿದ್ಯಾರ್ಥಿಗಳು ಹಾಗೂ ತಾಯಂದಿರು ಮೊದಲನೆಯದಾಗಿ ಈ ಸೌಲಭ್ಯ ಪಡೆಯುವಂತಾಗಲಿ ಎಂದರು.
ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಮಾತನಾಡಿ ಗ್ರಾಮದಲ್ಲಿ ಸ್ವಚ್ಚತೆಗೆ ಆದ್ಯತೆ ನೀಡಬೇಕು, ಎಲ್ಲೆಂದರಲ್ಲಿ ಹಾಕಿರುವ ಪ್ಲಾಸ್ಟಿಕ್ ತೆಗೆದು ಸ್ವಚ್ಚತೆ ಕಾಪಾಡಬೇಕು. ಗ್ರಾಮಕ್ಕೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಶಾಸಕರು, ಸಂಸದರು ಕಲ್ಪಿಸಲಿದ್ದು ತಾವುಗಳು ಗ್ರಾಮವನ್ನು ಸಂಪೂರ್ಣವಾಗಿ ಸ್ವಚ್ಚವಾಗಿಟ್ಟುಕೊಳ್ಳಬೇಕೆಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಉಪನಿರ್ದೇಶಕ ಜಿ.ಕೊಟ್ರೇಶ್, ಕೆ.ಎಸ್.ಆರ್.ಟಿ.ಸಿ. ವಿಭಾಗೀಯ ನಿಯಂತ್ರಕರಾದ ಸಿದ್ದೇಶ್ ಹೆಬ್ಬಾಳ್, ತಹಶೀಲ್ದಾರ್ ಡಾ; ಅಶ್ವಥ್, ಕಾರ್ಯನಿರ್ವಾಹಕ ಅಧಿಕಾರಿ ರಾಮಭೋವಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಆಶಾ ನಾಗರಾಜ್ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


