ದಿನದ ಸುದ್ದಿ
ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ
ಸುದ್ದಿದಿನ,ದಾವಣಗೆರೆ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್. ಬಸವಂತಪ್ಪ ಅವರಿಗೆ ಸಚಿವ ಸ್ಥಾನ ದೊರೆತಿರುವುದು ದಾವಣಗೆರೆ ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಣಮಿಸಿದೆ. ಹಲವು ವರ್ಷಗಳಿಂದ ಪಕ್ಷದ ಸಂಘಟನೆಗೆ ಸಲ್ಲಿಸಿರುವ ಸೇವೆ, ಕ್ಷೇತ್ರದ ಅಭಿವೃದ್ಧಿಗೆ ನೀಡಿರುವ ಆದ್ಯತೆ ಹಾಗೂ ಜನಸಾಮಾನ್ಯರೊಂದಿಗೆ ಹೊಂದಿರುವ ನಿಕಟ ಸಂಪರ್ಕವನ್ನು ಪರಿಗಣಿಸಿ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಸಚಿವರಾಗಿ ಆಯ್ಕೆಯಾದ ಸುದ್ದಿ ಪ್ರಕಟವಾಗುತ್ತಿದ್ದಂತೆಯೇ ಮಾಯಕೊಂಡ ಕ್ಷೇತ್ರ ಸೇರಿದಂತೆ ದಾವಣಗೆರೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಭ್ರಮ ಮನೆಮಾಡಿತು. ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂತಸ ವ್ಯಕ್ತಪಡಿಸಿದರು. ಬಸವಂತಪ್ಪ ಅವರ ನಿವಾಸದ ಎದುರು ಬೆಳಗ್ಗಿನಿಂದಲೇ ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳು ಜಮಾಯಿಸಿ ಅಭಿನಂದನೆ ಸಲ್ಲಿಸಿದರು. ಮಹಿಳೆಯರು ಆರತಿ ಬೆಳಗಿ ಸ್ವಾಗತ ಕೋರಿದರೆ, ಯುವಕರು ಘೋಷಣೆಗಳನ್ನು ಕೂಗಿ ಸಂಭ್ರಮಾಚರಣೆ ನಡೆಸಿದರು.
ಕೆ.ಎಸ್. ಬಸವಂತಪ್ಪ ಅವರು ಹಲವು ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದು, ರೈತರ ಸಮಸ್ಯೆಗಳು, ಕುಡಿಯುವ ನೀರಿನ ಯೋಜನೆಗಳು, ಗ್ರಾಮೀಣ ರಸ್ತೆ ಅಭಿವೃದ್ಧಿ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಿಗೆ ವಿಶೇಷ ಆದ್ಯತೆ ನೀಡುವ ಮೂಲಕ ಜನರ ವಿಶ್ವಾಸ ಗಳಿಸಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಿರುವ ಕಾರಣದಿಂದಲೇ ಅವರಿಗೆ ಸಚಿವ ಸ್ಥಾನ ದೊರೆತಿದೆ ಎಂಬ ಅಭಿಪ್ರಾಯವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.
ಮಾಯಕೊಂಡ ಕ್ಷೇತ್ರವು ಕೃಷಿ ಪ್ರಧಾನ ಪ್ರದೇಶವಾಗಿದ್ದು, ಇಲ್ಲಿ ನೀರಾವರಿ, ರಸ್ತೆ, ಶಿಕ್ಷಣ, ಕೈಗಾರಿಕಾ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಯಂತಹ ಹಲವು ಸವಾಲುಗಳಿವೆ. ಸಚಿವ ಸ್ಥಾನ ದೊರೆತಿರುವ ಹಿನ್ನೆಲೆಯಲ್ಲಿ ಈ ಸಮಸ್ಯೆಗಳ ಪರಿಹಾರಕ್ಕೆ ಹೆಚ್ಚಿನ ವೇಗ ಸಿಗಲಿದೆ ಎಂಬ ನಿರೀಕ್ಷೆ ಜನರಲ್ಲಿ ಮೂಡಿದೆ. ವಿಶೇಷವಾಗಿ ರೈತರು, ಯುವಕರು ಹಾಗೂ ಮಹಿಳಾ ಸಂಘಟನೆಗಳು ಹೊಸ ಸಚಿವರಿಂದ ಹೆಚ್ಚಿನ ಅಭಿವೃದ್ಧಿ ಯೋಜನೆಗಳನ್ನು ನಿರೀಕ್ಷಿಸುತ್ತಿವೆ.
ಸಚಿವ ಸ್ಥಾನ ಘೋಷಣೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೆ.ಎಸ್. ಬಸವಂತಪ್ಪ ಅವರು, “ಈ ಜವಾಬ್ದಾರಿ ನನಗೆ ದೊರೆತಿರುವುದು ವೈಯಕ್ತಿಕ ಗೌರವ ಮಾತ್ರವಲ್ಲ, ಮಾಯಕೊಂಡ ಕ್ಷೇತ್ರದ ಪ್ರತಿಯೊಬ್ಬ ಮತದಾರನಿಗೂ ಸಂದ ಗೌರವವಾಗಿದೆ. ಮುಖ್ಯಮಂತ್ರಿ ಹಾಗೂ ಪಕ್ಷದ ಹಿರಿಯ ನಾಯಕರು ನನ್ನ ಮೇಲೆ ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ಜನರ ನಿರೀಕ್ಷೆಗಳನ್ನು ಈಡೇರಿಸುವುದು ನನ್ನ ಮೊದಲ ಆದ್ಯತೆಯಾಗಿರುತ್ತದೆ” ಎಂದು ಹೇಳಿದರು.
ರಾಜ್ಯದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದರ ಜೊತೆಗೆ, ದಾವಣಗೆರೆ ಜಿಲ್ಲೆಗೆ ಹೆಚ್ಚಿನ ಅಭಿವೃದ್ಧಿ ಯೋಜನೆಗಳನ್ನು ತರಲು ಪ್ರಯತ್ನಿಸಲಾಗುವುದು ಎಂದು ಅವರು ಭರವಸೆ ನೀಡಿದರು. ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ, ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ, ಶಾಲೆಗಳು ಮತ್ತು ಆಸ್ಪತ್ರೆಗಳ ಸೌಲಭ್ಯಗಳ ಸುಧಾರಣೆ, ಯುವಕರಿಗೆ ಉದ್ಯೋಗಾವಕಾಶಗಳ ಸೃಷ್ಟಿ ಹಾಗೂ ಮಹಿಳಾ ಸಬಲೀಕರಣ ಕಾರ್ಯಕ್ರಮಗಳಿಗೆ ವಿಶೇಷ ಗಮನ ಹರಿಸಲಾಗುವುದು ಎಂದು ತಿಳಿಸಿದರು.
ಪಕ್ಷದ ಜಿಲ್ಲಾ ಮುಖಂಡರು ಮಾತನಾಡಿ, ಬಸವಂತಪ್ಪ ಅವರ ಸಚಿವ ಸ್ಥಾನದಿಂದ ಜಿಲ್ಲೆಗೆ ಹೆಚ್ಚಿನ ಅನುದಾನ ಮತ್ತು ಅಭಿವೃದ್ಧಿ ಯೋಜನೆಗಳು ಹರಿದು ಬರಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಆಡಳಿತಾತ್ಮಕ ಮಟ್ಟದಲ್ಲಿ ಜಿಲ್ಲೆಯ ವಿವಿಧ ಯೋಜನೆಗಳಿಗೆ ವೇಗ ಸಿಗಲಿದ್ದು, ಬಾಕಿ ಉಳಿದಿರುವ ಹಲವು ಕಾಮಗಾರಿಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದರು.
ವಿವಿಧ ಸಂಘಟನೆಗಳ ಪ್ರತಿನಿಧಿಗಳು ಸಹ ಸಚಿವರಿಗೆ ಅಭಿನಂದನೆ ಸಲ್ಲಿಸಿ, ಜಿಲ್ಲೆಯ ಬಹುಕಾಲದ ಬೇಡಿಕೆಗಳಾದ ನೀರಾವರಿ ಯೋಜನೆಗಳ ವಿಸ್ತರಣೆ, ಕೈಗಾರಿಕಾ ಹೂಡಿಕೆ, ಸರ್ಕಾರಿ ಆಸ್ಪತ್ರೆಗಳ ಉನ್ನತೀಕರಣ, ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಗ್ರಾಮೀಣ ರಸ್ತೆ ಸುಧಾರಣೆಗೆ ಆದ್ಯತೆ ನೀಡುವಂತೆ ಮನವಿ ಮಾಡಿದರು.
ಸಾಮಾಜಿಕ ಜಾಲತಾಣಗಳಲ್ಲಿಯೂ ಬಸವಂತಪ್ಪ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿತು. ಸಾರ್ವಜನಿಕರು, ರಾಜಕೀಯ ಮುಖಂಡರು, ವಿವಿಧ ಸಂಘಟನೆಗಳು ಹಾಗೂ ಅಭಿಮಾನಿಗಳು ಶುಭಾಶಯಗಳನ್ನು ತಿಳಿಸಿ, ಸಚಿವರ ಹೊಸ ಜವಾಬ್ದಾರಿ ಯಶಸ್ವಿಯಾಗಲಿ ಎಂದು ಹಾರೈಸಿದರು.
ರಾಜಕೀಯ ವಿಶ್ಲೇಷಕರ ಅಭಿಪ್ರಾಯದಂತೆ, ರಾಜ್ಯ ಸಚಿವ ಸಂಪುಟದಲ್ಲಿ ಮಾಯಕೊಂಡ ಕ್ಷೇತ್ರಕ್ಕೆ ದೊರೆತಿರುವ ಈ ಪ್ರತಿನಿಧಿತ್ವವು ದಾವಣಗೆರೆ ಜಿಲ್ಲೆಯ ರಾಜಕೀಯ ಮಹತ್ವವನ್ನು ಮತ್ತಷ್ಟು ಹೆಚ್ಚಿಸಿದೆ. ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುವ ಜೊತೆಗೆ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಸಚಿವರ ಪಾತ್ರ ಮಹತ್ವದ್ದಾಗಿರಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಮಾಯಕೊಂಡ ಕ್ಷೇತ್ರದ ಜನರು ಸಚಿವ ಸ್ಥಾನವನ್ನು ಕೇವಲ ರಾಜಕೀಯ ಸಾಧನೆಯಾಗಿ ನೋಡದೇ, ಅಭಿವೃದ್ಧಿಯ ಹೊಸ ಅಧ್ಯಾಯದ ಆರಂಭವಾಗಿ ಪರಿಗಣಿಸುತ್ತಿದ್ದಾರೆ. ಕುಡಿಯುವ ನೀರು, ರಸ್ತೆ, ಕೃಷಿ, ಶಿಕ್ಷಣ, ಆರೋಗ್ಯ ಹಾಗೂ ಕೈಗಾರಿಕಾ ಕ್ಷೇತ್ರಗಳಲ್ಲಿ ಗಮನಾರ್ಹ ಬದಲಾವಣೆಗಳು ಆಗಲಿವೆ ಎಂಬ ಆಶಾಭಾವನೆ ವ್ಯಕ್ತವಾಗಿದೆ.
ಕೆ.ಎಸ್. ಬಸವಂತಪ್ಪ ಅವರ ಸಚಿವ ಸ್ಥಾನವು ಮಾಯಕೊಂಡ ಕ್ಷೇತ್ರ ಹಾಗೂ ದಾವಣಗೆರೆ ಜಿಲ್ಲೆಗೆ ಹೊಸ ಅವಕಾಶಗಳನ್ನು ತೆರೆದಿದೆ. ಜನರ ವಿಶ್ವಾಸಕ್ಕೆ ತಕ್ಕಂತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಸರ್ಕಾರ ಮತ್ತು ಜನರ ನಡುವೆ ಪರಿಣಾಮಕಾರಿ ಸೇತುವೆಯಾಗಿ ಕಾರ್ಯನಿರ್ವಹಿಸುವ ನಿರೀಕ್ಷೆ ಎಲ್ಲ ವಲಯಗಳಲ್ಲೂ ವ್ಯಕ್ತವಾಗಿದೆ. ಮುಂದಿನ ದಿನಗಳಲ್ಲಿ ಅವರ ಆಡಳಿತಾತ್ಮಕ ನಿರ್ಧಾರಗಳು ಹಾಗೂ ಅಭಿವೃದ್ಧಿ ಯೋಜನೆಗಳ ಅನುಷ್ಠಾನ ಜಿಲ್ಲೆಯ ಭವಿಷ್ಯದ ದಿಕ್ಕನ್ನು ನಿರ್ಧರಿಸಲಿವೆ ಎಂಬ ಅಭಿಪ್ರಾಯ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.
ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.
ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ
ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್, ಚೇತನ್ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.
ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.
ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.
ಹೌದು! 2023ರ ಆಗಸ್ಟ್ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.
http://Visit : www.suddidina.com
ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ:
ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.
ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.
ಕುಟುಂಬದ ಬಜೆಟ್ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:
ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.
ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.




