ಬಹಿರಂಗ
ಕೊರೊನಾಕ್ಕೆ ಸ್ವಾಗತ ಕೋರುತ್ತಿರುವ ಮಾಧ್ಯಮಗಳು
- ಭಾರತೀಯರಲ್ಲಿ ರೋಗನಿರೋಧಕ ಶಕ್ತಿ (ರೋ.ಶ.) ಗಟ್ಟಿ ಇದೆ; ಈ ದೇಶದ ಉಷ್ಣಾಂಶವೂ ವೈರಾಣುವನ್ನು ಹಿಮ್ಮೆಟ್ಟಿಸುವಂತಿದೆ. ಆದರೆ ಮಾಧ್ಯಮಗಳ ಡೋಲು ತಮಟೆಯಿಂದಾಗಿ ನಮ್ಮ ರೋ.ಶ. ತಗ್ಗುವ, ನಾವು ಸೋಲುವ ಸಾಧ್ಯತೆ ಹೆಚ್ಚುತ್ತಿದೆ. ಈ ಕುರಿತು ತುಸು ಉದ್ದನ್ನ ಆದರೆ ಸರಳವಾದ ವೈಜ್ಞಾನಿಕ ವಿಶ್ಲೇಷಣೆ ಇಲ್ಲಿದೆ.
-ನಾಗೇಶ್ ಹೆಗಡೆ
ದೇಹವೆಂಬ ಈ ಭದ್ರಕೋಟೆ ಗಟ್ಟಿಯಾಗಿದ್ದರೆ ಕೊರೊನಾ ವೈರಸ್ಸನ್ನು ಸುಲಭವಾಗಿ ಮಣಿಸಬಹುದು. ಇಳಿವಯಸ್ಸಿನಲ್ಲಿ ರೋಗನಿರೋಧಕ ವ್ಯವಸ್ಥೆ (ಇಮ್ಯೂನ್ ಸಿಸ್ಟಮ್) ಕಡಿಮೆಯಾಗುತ್ತದೆ ಎಂಬುದೇನೋ ನಿಜ. ಆದರೆ ಇಲ್ಲೊಂದು ಸ್ವಾರಸ್ಯ ಇದೆ. ನಮ್ಮ ವಯಸ್ಸಿಗೂ ರೋಗನಿರೋಧಕತೆಗೂ ಅಷ್ಟೇನೂ ನೇರ ಸಂಬಂಧ ಇಲ್ಲ. ನಿಮ್ಮ ವಯಸ್ಸು45 ಇದ್ದರೆ ನಿಮ್ಮ ರೋಗನಿರೋಧಕ ವ್ಯವಸ್ಥೆಗೆ 60 ವರ್ಷ ಆಗಿರಬಹುದು. ಅಥವಾ ಅದು 25ರ ಯೌವನದಲ್ಲಿರಬಹುದು.
ನಮ್ಮ ದೇಹದ ಎಲ್ಲ ಅಂಗಾಂಗಗಳೂ ಅಷ್ಟೆ.ನಿಮಗೆ 45 ವರ್ಷ ಆಗಿದ್ದರೆ ನಿಮ್ಮ ಕಣ್ಣಿಗೆ 55 ಅಥವಾ 35 ಆಗಿರಬಹುದು. ನಿಮ್ಮ ಕೂದಲಿಗೆ 55 ವರ್ಷ ಆಗಿರಬಹುದು; ನಿಮ್ಮ ಕಿವಿಗೆ 49ಮತ್ತು ದಂತಪಂಕ್ತಿಗೆ 35 ಆಗಿರಬಹುದು (ಈ ವಿಲಕ್ಷಣತೆಯ ಕುರಿತು ಅಂಕಿತ ಪುಸ್ತಕ ಪ್ರಕಟಿಸಿದ ‘ನಮ್ಮೊಳಗಿನ ಬ್ರಹ್ಮಾಂಡ’ ಎಂಬ ನನ್ನ ಪುಸ್ತಕದಲ್ಲಿ ವಿಸ್ತೃತ ಲೇಖನ ಇದೆ).
ಈ ನಮ್ಮ ರೋಗನಿರೋಧಕ ಶಕ್ತಿಯ ಲಕ್ಷಣಗಳೇನು?
ಎಲ್ಲರ ದೇಹದಲ್ಲೂ ಎರಡು ಬಗೆಯ ರೋಗನಿರೋಧಕ ಶಕ್ತಿ (ರೋ.ಶ.) ಇರುತ್ತದೆ.
(1) ಜನ್ಮತಃ ಬಂದಿರುವುದು. ನಾವು ಮಗುವಾಗಿದ್ದಾಗಲಿಂದ ಮ್ಯಾಕ್ರೊಫೇಜ್ ಮತ್ತು ನ್ಯೂಟ್ರೊಫಿಲ್ಸ್ ಹೆಸರಿನ ಕೋಶಗಳು ರಕ್ತದಲ್ಲಿ ಓಡಾಡುತ್ತಿರುತ್ತವೆ. ದೇಹದಲ್ಲಿ ರೋಗಾಣುಗಳು ಹೊಕ್ಕರೆ ಇದು ತಕ್ಷಣವೇ ದಾಳಿ ಮಾಡಲು ಸಜ್ಜಾಗಿರುತ್ತದೆ.
(2) ಸಾಂದರ್ಭಿಕ ವ್ಯವಸ್ಥೆ: ದಾಳಿಗೆ ಬಂದ ರೋಗಾಣುವಿನ ಗುರುತು ಚೆಹರೆಯನ್ನು ಸರಿಯಾಗಿ ನೋಡಿ, ಅದರ ಶಸ್ತ್ರಾಸ್ತ್ರಗಳ ಅಧ್ಯಯನ ಮಾಡಿ, ಅದನ್ನು ಮಣಿಸಬಲ್ಲ ಪ್ರತ್ಯಸ್ತ್ರಗಳನ್ನು ಸಿದ್ಧಪಡಿಸಿಕೊಂಡು ಯುದ್ಧಕ್ಕೆ ಇಳಿಯುತ್ತದೆ. ಕೌರವ ಗದೆಯನ್ನು ಹೊತ್ತಿದ್ದರಿಂದಲೇ ಗದೆ ಹಿಡಿದ ಭೀಮನನ್ನೇ ಯುದ್ಧಕ್ಕೆ ಇಳಿಸಿದ್ದನಲ್ಲ ಆ ಕೃಷ್ಣ? ಹಾಗೇ ಇದು. ಆದರೆ ಈ ರೋ.ಶ. ತಕ್ಷಣಕ್ಕೆ ಪ್ರಕಟ ಆಗುವುದಿಲ್ಲ. ಸೂಕ್ತ ವೇಷ ಧರಿಸಿ ರಂಗಕ್ಕೆ ಬರಲು ತುಸು ಸಮಯ ಬೇಕು ತಾನೆ? ರಕ್ತದಲ್ಲಿ T ಕೋಶ, B ಕೋಶ ಹಾಗೂ ಪ್ರತಿಕಾಯಗಳು (ಆಂಟಿಬಾಡೀಸ್) ಹೀಗೆ ಹೊಸದಾಗಿ ಸೃಷ್ಟಿಯಾಗಿ ಯುದ್ಧಕ್ಕೆ ಇಳಿಯುತ್ತವೆ.
ಒಮ್ಮೆ ಇವು ವೇಷ ಧರಿಸಲು ಕಲಿತರೆ ನಮ್ಮ ದೇಹ ಅದನ್ನು ಎಂದೂ ಮರೆಯುವುದಿಲ್ಲ. ಮಮ್ಸ್ ಅಥವಾ ದಢಾರದ ರೋಗಾಣುಗಳ ವಿರುದ್ಧ ಶಸ್ತ್ರಾಸ್ತ್ರ ಸಜ್ಜಾಗಿ, ಬಾಲ್ಯದಲ್ಲಿ ಈ ರೋಗಗಳನ್ನು ಮಣಿಸಿದ್ದೇ ಆದರೆ ಮುಂದೆ ಎಂದೂ ಈ ರೋಗಗಳು ಬಾರದಂತೆ ದೇಹ ಅದೇ ಶಸ್ತ್ರಾಸ್ತ್ರವನ್ನು ಶೀಘ್ರದಲ್ಲೇ ಹಿಡಿದು ನಿಲ್ಲುತ್ತದೆ.
[ಎಲ್ಲ ಸಂದರ್ಭದಲ್ಲೂ ಹೀಗೇ ಎಂದು ಹೇಳುವಂತಿಲ್ಲ. ರೋಗಾಣು ತನ್ನ ಹಳೇ ರೂಪವನ್ನು ಕಳಚಿಹಾಕಿ ಹೊಸ ರೂಪದಲ್ಲಿ ಬಂದರೂ ಬಂದೀತು. ಕೊರೊನಾ ವೈರಸ್ಸಿಗೆ ಈ ಗುಣ ಇದೆ. 2003ರಲ್ಲಿ ‘ಸಾರ್ಸ್’ ಹೆಸರಿನಲ್ಲಿ ಬಂದ ಇದೇ ಕೊರೊನಾ ವೈರಾಣು ಈಗ ಬೇರೆ ಕವಚ ಧರಿಸಿ ಬಂದಿದೆ. ಅದಕ್ಕೇ ಈಗಿನ ಈ ಹೊಸ ರಾಮಾಯಣ.]
ಹಾಗೆಂದು ಹೆದರಬೇಕಿಲ್ಲ. ಬಹುಪಾಲು ಜನರಲ್ಲಿ ಹುಟ್ಟಿದಾಗಿನಿಂದ ಬಂದ ರೋ.ಶ. ಸಾಕಷ್ಟು ಗಟ್ಟಿಯಾಗಿಯೇ ಇರುತ್ತದೆ. ಕೋವಿಡ್-೧೯ ಕಾಯಿಲೆ ಬಂದವರಲ್ಲಿ ಅರ್ಧಕ್ಕರ್ಧ ಜನಕ್ಕೆ ಕಾಯಿಲೆಯ ಲಕ್ಷಣಗಳು ಎದ್ದುಕಾಣುವ ಮೊದಲೇ ರೋಗಾಣು ನಿರ್ನಾಮ ಆಗಿರುತ್ತದೆ. ಇನ್ನು ಕೆಲವಷ್ಟು ಜನರು ಒಣಕೆಮ್ಮು, ಜ್ವರದಿಂದ ನಾಲ್ಕಾರು ದಿನ ಫಜೀತಿಪಟ್ಟರೂ ಅವರು ಆಸ್ಪತ್ರೆಗೆ ಧಾವಿಸಬೇಕಾಗಿಲ್ಲ. ನಾರು, ಬೇರು, ಶುಂಠಿ- ಅಮೃತಬಳ್ಳಿ ಕಷಾಯ, ಬೆಚ್ಚಗಿನ ಉಪ್ಪುನೀರಲ್ಲಿ ಬಾಯಿ ಮುಕ್ಕಳಿಸುವುದೇ ಮುಂತಾದ ಮನೆಮದ್ದು ಮಾಡಿಸಿಕೊಳ್ಳುತ್ತ ವಿಶ್ರಾಂತ ಸ್ಥಿತಿಯಲ್ಲಿದ್ದರೆ ಸಾಕು.ಆಂಟಿಬಯಾಟಿಕ್ಸ್ (ಜೀವಿರೋಧಕ ಮಾತ್ರೆ) ಕೂಡ ಬೇಕಾಗುವುದಿಲ್ಲ. ಇನ್ನು ಮೂರನೆಯ ಕೆಟೆಗರಿಯವರು ಆಸ್ಪತ್ರೆಗೆ ಹೋಗಿ ಔಷಧಗಳ ಸಾಗರದಲ್ಲಿ ಮಿಂದೆದ್ದು ನಿಂತು ಗುಣಮುಖರಾಗಿ ಬರುತ್ತಾರೆ.
ತೀರ ಅಪರೂಪಕ್ಕೆ ನೂರರಲ್ಲಿ ಒಬ್ಬಿಬ್ಬರಿಗೆ (ಮಾತ್ರ) ಶ್ವಾಸಕೋಶದಲ್ಲಿ ನೀರು ತುಂಬಿಕೊಂಡು, ಉಸಿರಾಟವೂ ಕಷ್ಟವಾಗಿ, ಕೃತಕ ಉಸಿರಾಟದ ವೆಂಟಿಲೇಟರ್ ಹಾಕಿಸಿಕೊಳ್ಳಬೇಕಾಗುತ್ತದೆ. ಅವರ ವಿಷಯ ಕೊಂಚ ಕಷ್ಟ. ಅಂಥವರಲ್ಲಿ ರೋ.ಶ. ದುರ್ಬಲವಾಗಿರುತ್ತದೆ. ಒಂದೋ ಅವರು ತೀರ ಇಳಿವಯಸ್ಸಿನವರಾಗಿ, ಸಂಸಾರಬಂಧನವನ್ನು ಕಳಚಿಕೊಳ್ಳಲು ಸಿದ್ಧರಾಗಿರಬಹುದು. ಅಥವಾ ಕಿರಿ ವಯಸ್ಸಿನವರಾಗಿದ್ದರೂ ಅವರ ರೋ.ಶ.ಕ್ಕೆ ಜಾಸ್ತಿ ವಯಸ್ಸಾಗಿರಬಹುದು. ಅಂದರೆ, ಈಗಾಗಲೇ ಸ್ಥೂಲ ದೇಹಿಗಳಾಗಿ, ಇಲ್ಲವೆ ಸಕ್ಕರೆ ರೋಗಿಗಳಾಗಿ, ಅಥವಾ ಹೃದಯಸಂಬಂಧೀ ಕಾಯಿಲೆಯವರಾಗಿ ಅಥವಾ ಬೀಡಿ-ಸಿಗರೇಟು ಚಟದಿಂದಾಗಿ ಅವರ ಶ್ವಾಸಕೋಶ ಸಾಕಷ್ಟು ಆಗಲೇ ಸುಸ್ತಾಗಿರಬಹುದು. ಅಂಥವರು ಹುಷಾರಾಗಿರಬೇಕು.
ಹಾಗೆಂದು ಕೊರೊನಾ ಬಂತೆಂದು ಅವರೂ ತೀರ ಗಾಬರಿ ಪಡಬೇಕಿಲ್ಲ. ಫ್ರಾನ್ಸಿನ ಪಾಶ್ಚರ್ ಸಂಶೋಧನಾ ಸಂಸ್ಥೆಯ ತಜ್ಞರ 2018ರ ಅಧ್ಯಯನದ ಪ್ರಕಾರ, ಚಿಕ್ಕಂದಿನಿಂದ ನಾನಾ ಬಗೆಯ ವೈರಾಣು, ಬ್ಯಾಕ್ಟೀರಿಯಾ, ಜಂತುಹುಳುವಿನ ಬಾಧೆಯನ್ನು ಎದುರಿಸಿದ ದೇಹದಲ್ಲಿ ಸಾಕಷ್ಟು ಬಗೆಯ ಶಸ್ತ್ರಾಸ್ತ್ರಗಳು ಜಮಾ ಆಗಿರುತ್ತವೆ. ಒಂದಲ್ಲ ಒಂದು ಶಸ್ತ್ರದಿಂದ ಕೊರೊನಾ ಕೂಡ ಹಿಮ್ಮೆಟ್ಟಬಹುದು. ಆದರೆ ಬಾಲ್ಯದಿಂದಲೂ ತೀರ ಶುಚಿಯಾದ ನೀರು, ತೀರ ಶುದ್ಧಾತಿಶುದ್ಧ ಆಹಾರ ಸೇವಿಸುತ್ತ ಶುದ್ಧೋದನನ ಅರಮನೆಯ ಮಕ್ಕಳಂತೆ ಬೆಳೆದಿದ್ದರೆ ಅಂಥವರ ದೇಹದಲ್ಲಿ ರೋಗನಿರೋಧಕ ಶಸ್ತ್ರಾಸ್ತ್ರಗಳ ಸಂಖ್ಯೆ ಕಡಿಮೆ ಇರುತ್ತದೆ. (ಯುರೋಪ್ ಅಮೆರಿಕದಲ್ಲಿ ಎಷ್ಟೆಲ್ಲ ಜನರನ್ನು ಕೋವಿಡ್ ಕೊಲ್ಲುತ್ತಿದೆ.) ಇದೀಗ ಬಂದ ಮಾಹಿತಿಯ ಪ್ರಕಾರ, ಬಾಲ್ಯದಲ್ಲಿ ಕ್ಷಯನಿರೋಧಕ ಬಿಸಿಜಿ ಚುಚ್ಚುಮದ್ದನ್ನು ಹಾಕಿಸಿಕೊಂಡಿದ್ದರೆ ಅಂಥವರಿಗೆ ಕೊರೊನಾ ಅಷ್ಟಾಗಿ ಬಾಧಿಸುವುದಿಲ್ಲವಂತೆ. ಭಾರತ, ಜಪಾನ್ ಮುಂತಾದ ಕೆಲವೇ ದೇಶಗಳಲ್ಲಿ ಹಿಂದೆಲ್ಲ ಬಿಸಿಜಿ ಕಡ್ಡಾಯವಾಗಿತ್ತು. ಇಂಥ ದೇಶಗಳಲ್ಲಿ ಕೊರೊನಾ ಕುಣಿದಾಟ ಇದುವರೆಗೆ ಕಡಿಮೆ ಇದೆ.
ಇವೆಲ್ಲಕ್ಕಿಂತ ಮುಖ್ಯವಾಗಿ ರೋ.ಶ. ನಮ್ಮನಮ್ಮ ಜೀನ್ಸ್ ಅಂದರೆ ರಕ್ತಗುಣದಲ್ಲಿ ಬಂದಿರುತ್ತದೆ. ನಮ್ಮ ತಾತ, ಮುತ್ತಜ್ಜಿಯರು ಎಷ್ಟೆಷ್ಟು ಬಗೆಯ ರೋಗಗಳನ್ನು ಎದುರಿಸಿ ಬದುಕಿದ್ದರಿಂದಲೇ ನಾವು ಇಂದು ಇಲ್ಲಿದ್ದೇವೆ. ಯುರೋಪ್ ಅಮೆರಿಕದಂತಹ ಚಳಿಪ್ರದೇಶಗಳಲ್ಲಿ ಹಿಂದಿನ ಕಾಲದಲ್ಲೂ ರೋಗಾಣುಗಳ ಸಂಖ್ಯೆ ತೀರ ಕಮ್ಮಿ ಇತ್ತು. ಹಿಮಪ್ರದೇಶಗಳಲ್ಲಿ ಸೊಳ್ಳೆ ಕೂಡ ಇರುವುದಿಲ್ಲ. ಹಾಗಾಗಿ ಅವರ ವಂಶಗುಣದಲ್ಲಿ ರೋ.ಶ. ಸಹಜವಾಗಿ ಕಡಿಮೆ ಇತ್ತು. ಆದ್ದರಿಂದಲೇ ಪ್ಲೇಗು, ಸಿಡುಬಿನಂಥ ಕಾಯಿಲೆಗಳು ಬಂದೆರಗಿದಾಗ ಅಲ್ಲಿಯ ಜನರು ಅಕ್ಷರಶಃ ಹುಳಗಳಂತೆ ಸಾಯುತ್ತಿದ್ದರು.
ಈಗಲೂ ಸಾಮಾನ್ಯ ನೆಗಡಿ ಜ್ವರಕ್ಕೇ ಅಮೆರಿಕದಲ್ಲಿ ದಿನಕ್ಕೆ ಸರಾಸರಿ ನೂರು ಜನರು (ಹೌದು, ಪ್ರತಿದಿನಕ್ಕೆ ನೂರು; ವರ್ಷಕ್ಕೆ 36ಸಾವಿರ ಜನರು) ಸಾಯುತ್ತಾರೆ. ಅದಕ್ಕೆ ಲಸಿಕೆ ಪಸಿಕೆ,ನೂರೊಂದು ಔಷಧಗಳು ಇದ್ದರೂ ಫ್ಲೂ ರೋಗಾಣು ಅಷ್ಟೊಂದು ಜನರನ್ನು ಬಲಿ ತೆಗೆದುಕೊಳ್ಳುತ್ತಿದೆ. ಅವರ ದುರದೃಷ್ಟಕ್ಕೆ ಈಗಿನ ಈ ಕೊರೊನಾ ಕೂಡ ಚಳಿಮಂಜಿನ ದಿನಗಳಲ್ಲಿ (ಉಷ್ಣತೆ 7ರಿಂದ 25 ಡಿಗ್ರಿ ಸೆ. ಇದ್ದಲ್ಲಿ) ತುಂಬ ಉಗ್ರವಾಗಿರುತ್ತದೆ. ವೈರಾಣುಗಳು ಪಬ್ಗಳಲ್ಲಿ, ಸೂಪರ್ ಬಝಾರ್ಗಳಲ್ಲಿ ಬಾಗಿಲ ಹಿಡಿಕೆಗಳ ಮೇಲೆ, ಎಸ್ಕಲೇಟರಿನ ಜಾರುಪಟ್ಟಿಯ ಮೇಲೆ, ಲಿಫ್ಟ್ ಎಂಬ ಏರುಬಂಡಿಯಲ್ಲಿರುವ ಬಟನ್ಗಳ ಮೇಲೆ ಹೆಚ್ಚಿನ ಅವಧಿಯಲ್ಲಿ ಜೀವಂತವಾಗಿ ಕೂತಿರುತ್ತವೆ. ಪಾರ್ಕಿನಲ್ಲಿ, ಫುಟ್ಪಾತ್ ನಲ್ಲಿ, ರೈಲಿನಲ್ಲಿ, ಲಿಫ್ಟ್ನಲ್ಲಿ ಆಲಿಂಗನ, ಚುಂಬನ ಇದ್ದಲ್ಲಂತೂ ವೈರಾಣುವಿಗೆ ಮಜವೋ ಮಜ!
ನಮ್ಮ ದೇಹ, ನಮ್ಮ ದೇಶ ಎರಡೂ ಗಟ್ಟಿಮುಟ್ಟಾಗಿದೆ. ಇಲ್ಲಿ ಬೇಸಿಗೆ ಉಗ್ರವಾಗಿದೆ, ವೈರಾಣುವಿನ ಉಗ್ರತೆಯನ್ನು ಗಾಳಿಯೇ ಕಮ್ಮಿ ಮಾಡಿರುತ್ತದೆ. ಜೊತೆಗೆ ಇಲ್ಲಿನ ಹತ್ತಾರು, ಅಷ್ಟೇಕೆ ನೂರಾರು ಬಗೆಯ ರೋಗಾಣುಗಳ ಸಂತೆಯನ್ನೇ ನೋಡಿ ಕೊರೊನಾ ಇನ್ನಷ್ಟು ನರ್ವಸ್ ಆಗಲೂ ಬಹುದು. ಆ ಸಂತೆಯಲ್ಲಿ ಓಡಾಡುತ್ತ ನಾವು ನಮ್ಮ ದೇಹದಲ್ಲಿ ಎಷ್ಟೊಂದು ರೋ.ಶ. ಶಸ್ತ್ರಾಸ್ತ್ರಗಳನ್ನು ಪೇರಿಸಿಕೊಂಡಿದ್ದೇವೆ. ಅಮೆರಿಕದಲ್ಲಿ ಫ್ಲೂ ರೋಗದಿಂದ ಸಾಯುವವರ ಸಂಖ್ಯೆಯನ್ನು ನೆನಪಿಸಿಕೊಳ್ಳಿ. ನಾವೂ ವರ್ಷಕ್ಕೆ ಎಷ್ಟೊಂದು ಬಾರಿ ಫ್ಲೂ-ನೆಗಡಿ ಎದುರಿಸುವುದಿಲ್ಲ? ನಮ್ಮಲ್ಲಿ ನೆಗಡಿಜ್ವರದ ಸಾವಿನ ಸಂಖ್ಯೆ ಅಮೆರಿಕದ ಹತ್ತರಲ್ಲೊಂದು ಪಾಲೂ ಇಲ್ಲ.
ಆದರೂ ನಾವು ಎಚ್ಚರದಿಂದಿರಬೇಕು. ಯಾಕೆ ಗೊತ್ತೆ? ನಮ್ಮೊಳಗಿನ ರೋ.ಶ.ಕ್ಕೆ ಒಂದು ಸಣ್ಣ ದೌರ್ಬಲ್ಯವೂ ಇದೆ. ನಮ್ಮ ಮನಸ್ಸು ಅಧೀರವಾದರೆ, ನಾವು ಧೈರ್ಯಗುಂದಿದರೆ ಈ ರೋ.ಶ. ಕೂಡ ನರ್ವಸ್ ಆಗುತ್ತದೆ. ಬೇಕಿದ್ದರೆ ಯಾವುದೇ ಮನೋವಿಜ್ಞಾನಿಗಳನ್ನು ಕೇಳಿ ನೋಡಿ. ಮನೋಬಲಕ್ಕೂ ದೇಹಬಲಕ್ಕೂ ನೇರಸಂಬಂಧ ಇದೆ.
ಮಾಧ್ಯಮಗಳ ಈ ಬಗೆಯ ಡೋಲು ತಮಟೆಯ ಅಬ್ಬರದಿಂದಾಗಿ ನಮ್ಮ ಆತ್ಮವಿಶ್ವಾಸ, ನಮ್ಮ ರೋಗನಿರೋಧಕ ಶಕ್ತಿ ಕೂಡ ಕುಂದಬಹುದು. ಟಿವಿ ನೋಡುತ್ತ ಕೂತಂತೆ ಗಂಟಲಲ್ಲಿ ಸಣ್ಣ ಕೆರೆತವೂ ದೊಡ್ಡದಾಗಿ, ಸಣ್ಣ ಆಕ್ಷೀ ಕೂಡ ದೊಡ್ಡ ಸೀನನ್ನೇ ಸೃಷ್ಟಿ ಮಾಡಿ ನಮ್ಮನ್ನು ಮತ್ತು ಇಡೀ ಕುಟುಂಬವನ್ನು ತಬ್ಬಿಬ್ಬು ಮಾಡುತ್ತದೆ. ನಮ್ಮೊಳಗಿನ ರೋ.ಶ. ‘’ತೋಳ ಬಂತಲೇ ತೋಳ’’ದ ಕತೆಯಂತೆ ಮತ್ತೆ ಮತ್ತೆ ಧಿಗ್ಗನೆದ್ದು ಮತ್ತೆ ಮತ್ತೆ ಹೈರಾಣಾಗಿ ಮುದುಡುತ್ತದೆ.
ಅಷ್ಟೇ ಅಲ್ಲ, ಕಣ್ಣಿಗೆ ರಾಚುವ ಪ್ರತಿಯೊಂದು ಮುಖವಾಡವೂ ಕೊರೊನಾವನ್ನು ಸಂಕೇತಿಸುತ್ತದೆ. ಸಮಾಜದಲ್ಲಿ ಮುಗುಳ್ನಗೆಯೇ ಮರೆತಂತಾಗಿದೆ. ಭಯ, ಅಧೀರತೆ ಎಲ್ಲೆಲ್ಲೂ ತಾಂಡವವಾಡತೊಗಿದೆ. ಕೊರೊನಾ ಕೌರವ ಪಡೆಯನ್ನು ಕಂಡಾಕ್ಷಣ ಅಸಲೀ ಕದನ ಆರಂಭವಾಗುವ ಮೊದಲೇ ನಾವು ಉತ್ತರ ಕುಮಾರರಾಗುತ್ತಿದ್ದೇವೆ. ಅರ್ಜುನ ಅವಿತಿರುತ್ತಾನೆ.
ಕೊರೊನಾ ವೈರಾಣು ಜಾಣ. ವಿಮಾನ ಏರಿದರೆ ಜೆಟ್ ವೇಗದಲ್ಲಿ ಚಲಿಸಬಹುದು ಎಂಬುದು ಅದಕ್ಕೆ ಗೊತ್ತಾಗಿದೆ. ಯುರೋಪ್, ಅಮೆರಿಕಕ್ಕೆ ಹೋದರೆ ಪುಷ್ಕಳ ಬೇಟೆ ಸಿಗುತ್ತದೆ ಎಂಬುದೂ ಅದಕ್ಕೆ ಗೊತ್ತಿದೆ. ಹೇಗೂ ಮೀಡಿಯಾ ತನ್ನ ಸ್ವಾಗತಕ್ಕೆ ತುತ್ತೂರಿ ದುಂದುಭಿ ಮೊಳಗಿಸುತ್ತ, ಕಂಡಕಂಡವರಿಗೆ ಮುಖವಾಡ ತೊಡಿಸುತ್ತ, ಸಮೂಹಸನ್ನಿಯನ್ನು ಸೃಷ್ಟಿಸಿ ಇಡೀ ನಾಗರಿಕತೆಯ ಜಂಘಾಬಲವನ್ನೇ ಉಡುಗಿಸುತ್ತಿದೆ. ವಿಮಾನಗಳನ್ನು ನೆಲಕ್ಕಿಳಿಸಿ, ಹೈಸ್ಪೀಡ್ ರೈಲುಗಳನ್ನು, ಕಾರುಗಳನ್ನು ಹಡಗುಗಗಳನ್ನು ನಿಂತಲ್ಲೇ ನಿಲ್ಲಿಸಿದ್ದಷ್ಟೇ ಅಲ್ಲ, ಲಕ್ಷುರಿ ಕಾರುಗಳನ್ನು ತಯಾರಿಸುತ್ತಿದ್ದ ಜಿಎಮ್, ಫೋರ್ಡ್, ಟಾಟಾ ಮಹೀಂದ್ರಗಳೆಲ್ಲ ತಮ್ಮ ಕಾರ್ಖಾನೆಗಳಲ್ಲಿ ವೆಂಟಿಲೇಟರ್ಗಳನ್ನೂ ಟೆಸ್ಟಿಂಗ್ ಕಿಟ್ಗಳನ್ನೂ ತಯಾರಿಸಲು ತೊಡಗುವಂತೆ ಮಾಡಿದೆ. ಮಹಾನ್ ರಾಷ್ಟ್ರನಾಯಕರುಗಳನ್ನು ಟಿವಿ ಕ್ಯಾಮರಾಗಳ ಎದುರಿಗೆ ತಂದು ನಿಲ್ಲಿಸಿದೆ.
ಈ ಮಹಾನ್ ನಾಯಕರುಗಳಿಗೆ ಕೊರೊನಾ ಒಂದು ಹೊಸ ಪಾಠವನ್ನು ಕಲಿಸುತ್ತಿದೆ. ರಾಷ್ಟ್ರ ರಕ್ಷಣೆ ಎಂದರೆ ಕೇವಲ ಅಣ್ವಸ್ತ್ರಗಳನ್ನೋ ಫೈಟರ್ ಜೆಟ್ಗಳನ್ನೋ ಸಬ್ಮರೀನ್ಗಳನ್ನೋ ಪೇರಿಸುವುದಷ್ಟೇ ಅಲ್ಲ; ಸಮುದಾಯ ಆರೋಗ್ಯ, ಗುಣಮಟ್ಟದ ಔಷಧ, ಕೈಗೆಟಕುವ ಮಟ್ಟದಲ್ಲಿ ಸುಸಜ್ಜಿತ ಆಸ್ಪತ್ರೆ, ಸಮರ್ಪಣ ಮನೋಭಾವದ ಸ್ವಾಸ್ಥ್ಯ ಸಿಬ್ಬಂದಿ ಕೂಡ ರಕ್ಷಣೆಯ ಭಾಗವೇ ಆಗಬೇಕೆಂಬುದನ್ನು ಅದು ಕಲಿಸುತ್ತಿದೆ.
ಹಾಗೆಯೇ ನಗರಗಳಿಂದ ಗುಳೆಹೊರಟ ಬರಿಹೊಟ್ಟೆಯ, ಖಾಲಿ ಕಿಸೆಯ, ಬೊಬ್ಬೆಗಾಲಿನ ಶ್ರಮಜೀವಿಗಳ ಮೂಲಕ ಅದು ಸರಕಾರಗಳಿಗೆ ಇನ್ನೂ ಒಂದು ಪಾಠವನ್ನು ಕಲಿಸುತ್ತಿದೆ. ರಾಷ್ಟ್ರದ ಘನತೆ ಎಂದರೆ ಕೇವಲ ಥಳಥಳಿಸುವ ಐಟಿ ಪಾರ್ಕ್, ಏರ್ಪೋರ್ಟ್, ಭರ್ಜರಿ ಹೈವೇ, ಪೆಟ್ರೋಲ್ ಬಂಕ್ ಇದ್ದರೆ ಸಾಲದು; ಊರೂರಲ್ಲಿ ನೆರಳಿಗೆ ಒಂದಿಷ್ಟು ಗಿಡಮರಗಳು, ತುರ್ತು ಆಸರೆಗೆ ಉತ್ತಮ ಶಾಲೆ ಇರಬೇಕು, ಶುದ್ಧ ನೀರು-ಶೌಚದ ವ್ಯವಸ್ಥೆ ಇರಬೇಕು. ಕಡೇಪಕ್ಷ ರಕ್ತಸೋರುವ ಕಾಲುಗಳಿಗೆ ಬ್ಯಾಂಡೇಜ್ ಪಟ್ಟಿ ಸಿಗುವಂಥ ಪ್ರಾಥಮಿಕ ಶುಶ್ರೂಷೆಯ ಸೌಲಭ್ಯ ಇರಬೇಕು ಎಂದು ಅದು ಹೇಳುತ್ತಿದೆ.
ಮುಂದಿನ ಗಣರಾಜ್ಯದ ಪರೇಡ್ನಲ್ಲಿ ಮಿಲಿಟರಿ ಫೇರಿಗಿಂತ ಮುಂಚೂಣಿಯಲ್ಲಿ ಸುಸಜ್ಜಿತ ಆಸ್ಪತ್ರೆಯ, ಸುಸಜ್ಜಿತ ಶಾಲೆಯ ಮೆರವಣಿಗೆಯ ವ್ಯವಸ್ಥೆ ಮಾಡಿ ಎಂದು ಅದು ಹೇಳುತ್ತಿದೆಯೇನೊ.ಇದನ್ನೆಲ್ಲ ಅಳೆದು ತೂಗಿ ನೋಡಿದರೆ, ಪ್ರಾಯಶಃ ಕೊರೊನಾಕ್ಕೆ ನಾವು ಶಾಪ ಹಾಕಬೇಕಿಲ್ಲ. ಅದನ್ನು ಮೆರೆಸಿ ಕುಣಿಸುತ್ತಿರುವ ಮಾಧ್ಯಮವನ್ನೂ ಶಪಿಸಬೇಕಿಲ್ಲ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.
ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.
ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ
1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.
ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.
ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ
ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.
ಕನ್ನಡಿಗರ ಮನದ ಜಾನಕಿ
ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.
ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.
ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.
ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.
ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ
ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.
ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.
ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.
ಧ್ವನಿಯೊಳಗಿದ್ದ ಸಾವಿರ ರೂಪಗಳು
ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.
ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ
ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.
ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.
ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ
ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.
ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.
ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ
ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.
ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.
ಸರಳತೆಯೇ ಅವರ ಅಲಂಕಾರ
ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.
ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ
ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.
ಸಂಗೀತ ಲೋಕದ ಕಂಬನಿ
ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.
“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.
ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ
ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.
ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.
ಸ್ವರ ಮೌನವಾದರೂ…
ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.
ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.
ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.
ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ
ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಮಹತ್ವದ ಜವಾಬ್ದಾರಿಯನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ನೀಡಿದೆ.
ಈ ನೇಮಕ ಕೇವಲ ಸಂಘಟನಾತ್ಮಕ ಬದಲಾವಣೆಯಲ್ಲ. ಕರ್ನಾಟಕ ಕಾಂಗ್ರೆಸ್ನ ಮುಂದಿನ ರಾಜಕೀಯ ದಿಕ್ಕು, ಪಕ್ಷದ ಒಳಾಂಗಣ ಸಮತೋಲನ ಮತ್ತು ಭವಿಷ್ಯದ ಚುನಾವಣಾ ತಂತ್ರಗಳಿಗೆ ಇದು ಪ್ರಮುಖ ಸೂಚನೆಯಾಗಿದೆ. ಹಲವು ದಶಕಗಳ ರಾಜಕೀಯ ಅನುಭವ, ಸಂಘಟನಾ ಕೌಶಲ್ಯ ಮತ್ತು ಹೈಕಮಾಂಡ್ಗೆ ನಿಕಟ ಸಂಪರ್ಕ ಹೊಂದಿರುವ ಹರಿಪ್ರಸಾದ್ ಅವರು ಈಗ ರಾಜ್ಯ ಕಾಂಗ್ರೆಸ್ನ ನೂತನ ಸಾರಥಿಯಾಗಿ ಹೊರಹೊಮ್ಮಿದ್ದಾರೆ.
ಆರಂಭಿಕ ಜೀವನ ಮತ್ತು ಶಿಕ್ಷಣ
ಬಿ.ಕೆ. ಹರಿಪ್ರಸಾದ್ ಅವರು 1954ರ ಜುಲೈ 29ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಎ. ಕೆಂಪಯ್ಯ ಹಾಗೂ ತಾಯಿ ಕೆ. ಗುಣಾವತಿ. ಬಾಲ್ಯದಿಂದಲೇ ಸಾಮಾಜಿಕ ಮತ್ತು ರಾಜಕೀಯ ಚಟುವಟಿಕೆಗಳತ್ತ ಆಸಕ್ತಿ ಹೊಂದಿದ್ದ ಅವರು ಬೆಂಗಳೂರಿನ ಎಂ.ಇ.ಎಸ್. ಕಾಲೇಜಿನಲ್ಲಿ ಬಿ.ಕಾಂ ಪದವಿ ಶಿಕ್ಷಣ ಪಡೆದರು. ವಿದ್ಯಾರ್ಥಿ ಜೀವನದಲ್ಲಿಯೇ ಕಾಂಗ್ರೆಸ್ ಚಟುವಟಿಕೆಗಳೊಂದಿಗೆ ಗುರುತಿಸಿಕೊಂಡ ಅವರು ಮುಂದೆ ಪೂರ್ಣಾವಧಿ ರಾಜಕಾರಣಿಯಾಗಿ ಬೆಳೆದರು.
ವಿದ್ಯಾರ್ಥಿ ರಾಜಕಾರಣದಿಂದ ರಾಷ್ಟ್ರೀಯ ಮಟ್ಟದ ನಾಯಕತ್ವದವರೆಗೆ
ಹರಿಪ್ರಸಾದ್ ಅವರ ರಾಜಕೀಯ ಬದುಕು ವಿದ್ಯಾರ್ಥಿ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಸಂಘಟನೆಗಳಿಂದ ಆರಂಭವಾಯಿತು. ಸಂಘಟನಾ ರಾಜಕಾರಣದಲ್ಲಿ ತೋರಿದ ಸಾಮರ್ಥ್ಯದಿಂದ ಅವರು ಶೀಘ್ರದಲ್ಲೇ ಪಕ್ಷದ ಹಿರಿಯ ನಾಯಕರ ಗಮನ ಸೆಳೆದರು.
ರಾಜ್ಯ ಮಟ್ಟದಲ್ಲಿ ಮಾತ್ರವಲ್ಲದೆ ರಾಷ್ಟ್ರೀಯ ಮಟ್ಟದಲ್ಲೂ ಕಾಂಗ್ರೆಸ್ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ ಅವರು, ಹಲವು ರಾಜ್ಯಗಳ ಕಾಂಗ್ರೆಸ್ ವ್ಯವಹಾರಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಹೈಕಮಾಂಡ್ನೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ನಾಯಕರಲ್ಲಿ ಹರಿಪ್ರಸಾದ್ ಪ್ರಮುಖರು ಎಂದು ಪರಿಗಣಿಸಲಾಗುತ್ತದೆ.
ಬಿ.ಕೆ. ಹರಿಪ್ರಸಾದ್ ಅವರು ಹಲವು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. 1990ರಿಂದಲೇ ಅವರು ರಾಷ್ಟ್ರೀಯ ರಾಜಕಾರಣದಲ್ಲಿ ಸಕ್ರಿಯ ಪಾತ್ರ ವಹಿಸುತ್ತಾ ಬಂದಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪರವಾಗಿ ಹಲವು ವಿಷಯಗಳ ಬಗ್ಗೆ ಧ್ವನಿ ಎತ್ತಿದ ಅವರು ಸಂಸತ್ತಿನ ಚರ್ಚೆಗಳಲ್ಲಿ ಗಮನ ಸೆಳೆದಿದ್ದರು.
ಅವರು ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಒಕ್ಕೂಟದ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ಆ ಸಂದರ್ಭದಲ್ಲಿ ಎನ್ಡಿಎ ಅಭ್ಯರ್ಥಿ ಹರಿವಂಶ್ ನಾರಾಯಣ್ ಸಿಂಗ್ ವಿರುದ್ಧ ಪೈಪೋಟಿ ನಡೆಸಿದ್ದರು. ಸೋಲು ಕಂಡಿದ್ದರೂ ರಾಷ್ಟ್ರೀಯ ರಾಜಕೀಯದಲ್ಲಿ ಅವರ ಸ್ಥಾನಮಾನ ಮತ್ತಷ್ಟು ಬಲವತ್ತಾಯಿತು.
1999ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿಯ ಹಿರಿಯ ನಾಯಕ ಅನಂತ್ ಕುಮಾರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಜಯ ಸಾಧಿಸಲು ಸಾಧ್ಯವಾಗದಿದ್ದರೂ ಅವರು ಕಾಂಗ್ರೆಸ್ನ ಪ್ರಮುಖ ಮುಖವಾಗಿ ಗುರುತಿಸಿಕೊಂಡರು.
ಸಂಘಟನಾ ರಾಜಕಾರಣದಲ್ಲಿ ಹೆಚ್ಚು ಸಕ್ರಿಯರಾಗಿದ್ದ ಕಾರಣ, ಚುನಾವಣಾ ಗೆಲುವಿಗಿಂತ ಪಕ್ಷ ನಿರ್ಮಾಣದಲ್ಲಿ ಅವರ ಪಾತ್ರವೇ ಹೆಚ್ಚು ಗಮನ ಸೆಳೆಯಿತು.
ಕಾಂಗ್ರೆಸ್ ಸಂಘಟನೆಯಲ್ಲಿ ‘ಟಾಸ್ಕ್ ಮಾಸ್ಟರ್’
ಕಾಂಗ್ರೆಸ್ ಪಕ್ಷದಲ್ಲಿ ಹರಿಪ್ರಸಾದ್ ಅವರನ್ನು ಸಂಘಟನಾ ತಜ್ಞ ಎಂದು ಕರೆಯಲಾಗುತ್ತದೆ. ಪಕ್ಷ ಎದುರಿಸಿದ ಸಂಕಷ್ಟದ ಸಂದರ್ಭಗಳಲ್ಲಿ ಹಲವು ರಾಜ್ಯಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿ ಸಂಘಟನೆಯನ್ನು ಬಲಪಡಿಸಿದ ಅನುಭವ ಅವರಿಗೆ ಇದೆ.
ಇತ್ತೀಚಿನ ಅವಧಿಯಲ್ಲಿ ಅವರು ಹರಿಯಾಣ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯ ರಾಜಕೀಯದ ಸೂಕ್ಷ್ಮ ಸಮೀಕರಣಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಮತ್ತು ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಸಾಧಿಸುವ ಶೈಲಿ ಅವರ ವಿಶೇಷತೆ ಎಂದು ಪಕ್ಷದ ನಾಯಕರು ಹೇಳುತ್ತಾರೆ.
ಕರ್ನಾಟಕ ಕಾಂಗ್ರೆಸ್ನಲ್ಲಿ ಹರಿಪ್ರಸಾದ್ ಅವರು ಹಲವು ದಶಕಗಳಿಂದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳ ಸಂದರ್ಭದಲ್ಲೂ ಅವರು ಸಮತೋಲನ ಸಾಧಿಸುವ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.
ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅವರು, 2022 ರಿಂದ 2023ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸರ್ಕಾರದ ನೀತಿಗಳ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸುವ ಮೂಲಕ ಅವರು ಗಮನ ಸೆಳೆದಿದ್ದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ
2026ರಲ್ಲಿ ಕರ್ನಾಟಕ ರಾಜಕೀಯದಲ್ಲಿ ನಡೆದ ನಾಯಕತ್ವ ಬದಲಾವಣೆಯ ಬಳಿಕ ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ. ಶಿವಕುಮಾರ್ ವಹಿಸಿಕೊಂಡರು. ಇದರ ಪರಿಣಾಮವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಪಕ್ಷದೊಳಗೆ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದರೂ ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿತು.
ಈ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹೈಕಮಾಂಡ್ ಸಂಘಟನಾ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿ ಪರಿಗಣಿಸಿದೆ. ಪಕ್ಷದ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮತೋಲನ ಕಾಯ್ದುಕೊಳ್ಳಲು ಹರಿಪ್ರಸಾದ್ ಅವರ ಅನುಭವ ನೆರವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಹಿಂದೆ ಹಲವು ರಾಜಕೀಯ ಕಾರಣಗಳಿವೆ. ಮೊದಲನೆಯದಾಗಿ, ಅವರು ಯಾವುದೇ ಒಂದು ಗುಂಪಿಗೆ ಸೀಮಿತವಾಗದ ನಾಯಕ ಎಂಬ ಚಿತ್ರಣ ಹೊಂದಿದ್ದಾರೆ. ಎರಡನೆಯದಾಗಿ, ಸಂಘಟನಾ ಅನುಭವ ಅಪಾರವಾಗಿದೆ. ಮೂರನೆಯದಾಗಿ, ಹೈಕಮಾಂಡ್ಗೆ ಅತ್ಯಂತ ವಿಶ್ವಾಸಾರ್ಹ ನಾಯಕರಲ್ಲಿ ಒಬ್ಬರು. ನಾಲ್ಕನೆಯದಾಗಿ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳು ಮತ್ತು ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಾಮರ್ಥ್ಯ ಅವರಿಗಿದೆ ಎಂದು ಕಾಂಗ್ರೆಸ್ ನಾಯಕತ್ವ ನಂಬಿದೆ.
ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಅವರ ಮುಂದಿರುವ ಸವಾಲುಗಳು ಸಣ್ಣದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಸಂಘಟನೆಯನ್ನು ಸದೃಢವಾಗಿಡುವುದು ದೊಡ್ಡ ಜವಾಬ್ದಾರಿ. ಕಾರ್ಯಕರ್ತರ ಅಸಮಾಧಾನ, ಸಚಿವ ಸ್ಥಾನಾಕಾಂಕ್ಷಿಗಳ ಒತ್ತಡ, ಪ್ರಾದೇಶಿಕ ಸಮೀಕರಣಗಳು ಮತ್ತು ಜಾತಿ ಆಧಾರಿತ ರಾಜಕೀಯ ಬೇಡಿಕೆಗಳನ್ನು ಸಮತೋಲನಗೊಳಿಸಬೇಕಾಗಿದೆ.
ಇದರ ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಸಂಘಟನೆಯನ್ನು ನಿರಂತರ ಚಟುವಟಿಕೆಯಲ್ಲಿ ಇರಿಸುವುದು ಅವರ ಪ್ರಮುಖ ಗುರಿಯಾಗಲಿದೆ.
ಹರಿಪ್ರಸಾದ್ ಅವರು ಹೆಚ್ಚು ಪ್ರಚಾರಪ್ರಿಯ ರಾಜಕಾರಣಿಯಲ್ಲ. ಸಂಘಟನೆಯೊಳಗೆ ಕೆಲಸ ಮಾಡುವ ನಾಯಕ ಎಂಬ ಹೆಗ್ಗಳಿಕೆ ಅವರಿಗೆ ಇದೆ. ಕಾರ್ಯಕರ್ತರೊಂದಿಗೆ ನೇರ ಸಂಪರ್ಕ, ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಮತ್ತು ತಾಳ್ಮೆಯ ರಾಜಕೀಯ ಅವರ ಕಾರ್ಯಶೈಲಿಯ ಮುಖ್ಯ ಲಕ್ಷಣಗಳು.
ಅವರ ರಾಜಕೀಯ ಜೀವನದಲ್ಲಿ ಅನೇಕ ಏರಿಳಿತಗಳು ಬಂದಿದ್ದರೂ ಪಕ್ಷದ ಮೇಲಿನ ನಿಷ್ಠೆ ಪ್ರಶ್ನಾತೀತವಾಗಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಹಲವು ಬಾರಿ ಅವರಿಗೆ ಪ್ರಮುಖ ಜವಾಬ್ದಾರಿಗಳನ್ನು ನೀಡಿದೆ.
ರಾಜಕೀಯದ ಜೊತೆಗೆ ಸರಳ ಜೀವನಶೈಲಿಗೆ ಹೆಸರುವಾಸಿಯಾಗಿರುವ ಹರಿಪ್ರಸಾದ್ ಅವರು ಉಷಾ ಅವರೊಂದಿಗೆ ದಾಂಪತ್ಯ ಜೀವನ ನಡೆಸುತ್ತಿದ್ದಾರೆ. ಅವರಿಗೆ ಒಬ್ಬ ಪುತ್ರಿಯಿದ್ದಾರೆ. ಕುಟುಂಬ ಜೀವನವನ್ನು ರಾಜಕೀಯದಿಂದ ಸಾಧ್ಯವಾದಷ್ಟು ದೂರ ಇಡುವ ನಾಯಕ ಎಂಬ ಹೆಸರನ್ನು ಅವರು ಗಳಿಸಿದ್ದಾರೆ.
ಭವಿಷ್ಯದ ರಾಜಕೀಯ ಪಾತ್ರ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಹರಿಪ್ರಸಾದ್ ಅವರ ರಾಜಕೀಯ ಜೀವನದ ಮತ್ತೊಂದು ಮಹತ್ವದ ಅಧ್ಯಾಯವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮನ್ವಯ ಸಾಧಿಸುವಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ.
ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ತಂತ್ರ ರೂಪಿಸುವುದು, ಕಾರ್ಯಕರ್ತರ ಬಲವರ್ಧನೆ, ಚುನಾವಣಾ ಸಿದ್ಧತೆ ಮತ್ತು ಹೈಕಮಾಂಡ್ನೊಂದಿಗೆ ಸಮನ್ವಯ ಸಾಧಿಸುವ ಪ್ರಮುಖ ಹೊಣೆಗಾರಿಕೆ ಅವರ ಮೇಲಿದೆ. ಈ ಎಲ್ಲ ಸವಾಲುಗಳನ್ನು ಅವರು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಕರ್ನಾಟಕ ಕಾಂಗ್ರೆಸ್ನ ಮುಂದಿನ ರಾಜಕೀಯ ಭವಿಷ್ಯ ಬಹುಮಟ್ಟಿಗೆ ಅವಲಂಬಿತವಾಗಿದೆ.
ಸುಮಾರು ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಕಾಂಗ್ರೆಸ್ ಸಂಘಟನೆಯಲ್ಲಿ ದುಡಿದಿರುವ ಬಿ.ಕೆ. ಹರಿಪ್ರಸಾದ್ ಇಂದು ಕರ್ನಾಟಕ ಕಾಂಗ್ರೆಸ್ನ ಅತ್ಯುನ್ನತ ಸಂಘಟನಾ ಹುದ್ದೆಯನ್ನು ಅಲಂಕರಿಸಿದ್ದಾರೆ. ವಿದ್ಯಾರ್ಥಿ ರಾಜಕಾರಣದಿಂದ ಆರಂಭವಾದ ಅವರ ಪಯಣ ರಾಜ್ಯಸಭೆ, ರಾಷ್ಟ್ರೀಯ ಸಂಘಟನೆ, ವಿಧಾನ ಪರಿಷತ್ ಮತ್ತು ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನವರೆಗೆ ತಲುಪಿದೆ.
ಅನುಭವ, ಸಂಘಟನಾ ಕೌಶಲ್ಯ, ರಾಜಕೀಯ ಪ್ರೌಢಿಮೆ ಮತ್ತು ಪಕ್ಷದ ಮೇಲಿನ ನಿಷ್ಠೆ ಎಂಬ ನಾಲ್ಕು ಅಂಶಗಳು ಅವರ ರಾಜಕೀಯ ವ್ಯಕ್ತಿತ್ವದ ಪ್ರಮುಖ ಗುರುತುಗಳಾಗಿವೆ. ಕರ್ನಾಟಕ ಕಾಂಗ್ರೆಸ್ ಹೊಸ ರಾಜಕೀಯ ಹಾದಿಯಲ್ಲಿ ಸಾಗುತ್ತಿರುವ ಈ ಸಂದರ್ಭದಲ್ಲಿ, ಬಿ.ಕೆ. ಹರಿಪ್ರಸಾದ್ ಅವರ ನಾಯಕತ್ವ ಪಕ್ಷಕ್ಕೆ ಹೊಸ ಶಕ್ತಿ ತುಂಬುತ್ತದೆಯೇ ಎಂಬುದನ್ನು ರಾಜ್ಯದ ರಾಜಕೀಯ ಕುತೂಹಲದಿಂದ ಗಮನಿಸುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ6 days agoಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
-
ದಿನದ ಸುದ್ದಿ5 days agoಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ
-
ದಿನದ ಸುದ್ದಿ4 days agoಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ಗೌಡ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ
-
ದಿನದ ಸುದ್ದಿ1 day agoಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ


