ಬಹಿರಂಗ
ಕೊರೊನಾಕ್ಕೆ ಸ್ವಾಗತ ಕೋರುತ್ತಿರುವ ಮಾಧ್ಯಮಗಳು
- ಭಾರತೀಯರಲ್ಲಿ ರೋಗನಿರೋಧಕ ಶಕ್ತಿ (ರೋ.ಶ.) ಗಟ್ಟಿ ಇದೆ; ಈ ದೇಶದ ಉಷ್ಣಾಂಶವೂ ವೈರಾಣುವನ್ನು ಹಿಮ್ಮೆಟ್ಟಿಸುವಂತಿದೆ. ಆದರೆ ಮಾಧ್ಯಮಗಳ ಡೋಲು ತಮಟೆಯಿಂದಾಗಿ ನಮ್ಮ ರೋ.ಶ. ತಗ್ಗುವ, ನಾವು ಸೋಲುವ ಸಾಧ್ಯತೆ ಹೆಚ್ಚುತ್ತಿದೆ. ಈ ಕುರಿತು ತುಸು ಉದ್ದನ್ನ ಆದರೆ ಸರಳವಾದ ವೈಜ್ಞಾನಿಕ ವಿಶ್ಲೇಷಣೆ ಇಲ್ಲಿದೆ.
-ನಾಗೇಶ್ ಹೆಗಡೆ
ದೇಹವೆಂಬ ಈ ಭದ್ರಕೋಟೆ ಗಟ್ಟಿಯಾಗಿದ್ದರೆ ಕೊರೊನಾ ವೈರಸ್ಸನ್ನು ಸುಲಭವಾಗಿ ಮಣಿಸಬಹುದು. ಇಳಿವಯಸ್ಸಿನಲ್ಲಿ ರೋಗನಿರೋಧಕ ವ್ಯವಸ್ಥೆ (ಇಮ್ಯೂನ್ ಸಿಸ್ಟಮ್) ಕಡಿಮೆಯಾಗುತ್ತದೆ ಎಂಬುದೇನೋ ನಿಜ. ಆದರೆ ಇಲ್ಲೊಂದು ಸ್ವಾರಸ್ಯ ಇದೆ. ನಮ್ಮ ವಯಸ್ಸಿಗೂ ರೋಗನಿರೋಧಕತೆಗೂ ಅಷ್ಟೇನೂ ನೇರ ಸಂಬಂಧ ಇಲ್ಲ. ನಿಮ್ಮ ವಯಸ್ಸು45 ಇದ್ದರೆ ನಿಮ್ಮ ರೋಗನಿರೋಧಕ ವ್ಯವಸ್ಥೆಗೆ 60 ವರ್ಷ ಆಗಿರಬಹುದು. ಅಥವಾ ಅದು 25ರ ಯೌವನದಲ್ಲಿರಬಹುದು.
ನಮ್ಮ ದೇಹದ ಎಲ್ಲ ಅಂಗಾಂಗಗಳೂ ಅಷ್ಟೆ.ನಿಮಗೆ 45 ವರ್ಷ ಆಗಿದ್ದರೆ ನಿಮ್ಮ ಕಣ್ಣಿಗೆ 55 ಅಥವಾ 35 ಆಗಿರಬಹುದು. ನಿಮ್ಮ ಕೂದಲಿಗೆ 55 ವರ್ಷ ಆಗಿರಬಹುದು; ನಿಮ್ಮ ಕಿವಿಗೆ 49ಮತ್ತು ದಂತಪಂಕ್ತಿಗೆ 35 ಆಗಿರಬಹುದು (ಈ ವಿಲಕ್ಷಣತೆಯ ಕುರಿತು ಅಂಕಿತ ಪುಸ್ತಕ ಪ್ರಕಟಿಸಿದ ‘ನಮ್ಮೊಳಗಿನ ಬ್ರಹ್ಮಾಂಡ’ ಎಂಬ ನನ್ನ ಪುಸ್ತಕದಲ್ಲಿ ವಿಸ್ತೃತ ಲೇಖನ ಇದೆ).
ಈ ನಮ್ಮ ರೋಗನಿರೋಧಕ ಶಕ್ತಿಯ ಲಕ್ಷಣಗಳೇನು?
ಎಲ್ಲರ ದೇಹದಲ್ಲೂ ಎರಡು ಬಗೆಯ ರೋಗನಿರೋಧಕ ಶಕ್ತಿ (ರೋ.ಶ.) ಇರುತ್ತದೆ.
(1) ಜನ್ಮತಃ ಬಂದಿರುವುದು. ನಾವು ಮಗುವಾಗಿದ್ದಾಗಲಿಂದ ಮ್ಯಾಕ್ರೊಫೇಜ್ ಮತ್ತು ನ್ಯೂಟ್ರೊಫಿಲ್ಸ್ ಹೆಸರಿನ ಕೋಶಗಳು ರಕ್ತದಲ್ಲಿ ಓಡಾಡುತ್ತಿರುತ್ತವೆ. ದೇಹದಲ್ಲಿ ರೋಗಾಣುಗಳು ಹೊಕ್ಕರೆ ಇದು ತಕ್ಷಣವೇ ದಾಳಿ ಮಾಡಲು ಸಜ್ಜಾಗಿರುತ್ತದೆ.
(2) ಸಾಂದರ್ಭಿಕ ವ್ಯವಸ್ಥೆ: ದಾಳಿಗೆ ಬಂದ ರೋಗಾಣುವಿನ ಗುರುತು ಚೆಹರೆಯನ್ನು ಸರಿಯಾಗಿ ನೋಡಿ, ಅದರ ಶಸ್ತ್ರಾಸ್ತ್ರಗಳ ಅಧ್ಯಯನ ಮಾಡಿ, ಅದನ್ನು ಮಣಿಸಬಲ್ಲ ಪ್ರತ್ಯಸ್ತ್ರಗಳನ್ನು ಸಿದ್ಧಪಡಿಸಿಕೊಂಡು ಯುದ್ಧಕ್ಕೆ ಇಳಿಯುತ್ತದೆ. ಕೌರವ ಗದೆಯನ್ನು ಹೊತ್ತಿದ್ದರಿಂದಲೇ ಗದೆ ಹಿಡಿದ ಭೀಮನನ್ನೇ ಯುದ್ಧಕ್ಕೆ ಇಳಿಸಿದ್ದನಲ್ಲ ಆ ಕೃಷ್ಣ? ಹಾಗೇ ಇದು. ಆದರೆ ಈ ರೋ.ಶ. ತಕ್ಷಣಕ್ಕೆ ಪ್ರಕಟ ಆಗುವುದಿಲ್ಲ. ಸೂಕ್ತ ವೇಷ ಧರಿಸಿ ರಂಗಕ್ಕೆ ಬರಲು ತುಸು ಸಮಯ ಬೇಕು ತಾನೆ? ರಕ್ತದಲ್ಲಿ T ಕೋಶ, B ಕೋಶ ಹಾಗೂ ಪ್ರತಿಕಾಯಗಳು (ಆಂಟಿಬಾಡೀಸ್) ಹೀಗೆ ಹೊಸದಾಗಿ ಸೃಷ್ಟಿಯಾಗಿ ಯುದ್ಧಕ್ಕೆ ಇಳಿಯುತ್ತವೆ.
ಒಮ್ಮೆ ಇವು ವೇಷ ಧರಿಸಲು ಕಲಿತರೆ ನಮ್ಮ ದೇಹ ಅದನ್ನು ಎಂದೂ ಮರೆಯುವುದಿಲ್ಲ. ಮಮ್ಸ್ ಅಥವಾ ದಢಾರದ ರೋಗಾಣುಗಳ ವಿರುದ್ಧ ಶಸ್ತ್ರಾಸ್ತ್ರ ಸಜ್ಜಾಗಿ, ಬಾಲ್ಯದಲ್ಲಿ ಈ ರೋಗಗಳನ್ನು ಮಣಿಸಿದ್ದೇ ಆದರೆ ಮುಂದೆ ಎಂದೂ ಈ ರೋಗಗಳು ಬಾರದಂತೆ ದೇಹ ಅದೇ ಶಸ್ತ್ರಾಸ್ತ್ರವನ್ನು ಶೀಘ್ರದಲ್ಲೇ ಹಿಡಿದು ನಿಲ್ಲುತ್ತದೆ.
[ಎಲ್ಲ ಸಂದರ್ಭದಲ್ಲೂ ಹೀಗೇ ಎಂದು ಹೇಳುವಂತಿಲ್ಲ. ರೋಗಾಣು ತನ್ನ ಹಳೇ ರೂಪವನ್ನು ಕಳಚಿಹಾಕಿ ಹೊಸ ರೂಪದಲ್ಲಿ ಬಂದರೂ ಬಂದೀತು. ಕೊರೊನಾ ವೈರಸ್ಸಿಗೆ ಈ ಗುಣ ಇದೆ. 2003ರಲ್ಲಿ ‘ಸಾರ್ಸ್’ ಹೆಸರಿನಲ್ಲಿ ಬಂದ ಇದೇ ಕೊರೊನಾ ವೈರಾಣು ಈಗ ಬೇರೆ ಕವಚ ಧರಿಸಿ ಬಂದಿದೆ. ಅದಕ್ಕೇ ಈಗಿನ ಈ ಹೊಸ ರಾಮಾಯಣ.]
ಹಾಗೆಂದು ಹೆದರಬೇಕಿಲ್ಲ. ಬಹುಪಾಲು ಜನರಲ್ಲಿ ಹುಟ್ಟಿದಾಗಿನಿಂದ ಬಂದ ರೋ.ಶ. ಸಾಕಷ್ಟು ಗಟ್ಟಿಯಾಗಿಯೇ ಇರುತ್ತದೆ. ಕೋವಿಡ್-೧೯ ಕಾಯಿಲೆ ಬಂದವರಲ್ಲಿ ಅರ್ಧಕ್ಕರ್ಧ ಜನಕ್ಕೆ ಕಾಯಿಲೆಯ ಲಕ್ಷಣಗಳು ಎದ್ದುಕಾಣುವ ಮೊದಲೇ ರೋಗಾಣು ನಿರ್ನಾಮ ಆಗಿರುತ್ತದೆ. ಇನ್ನು ಕೆಲವಷ್ಟು ಜನರು ಒಣಕೆಮ್ಮು, ಜ್ವರದಿಂದ ನಾಲ್ಕಾರು ದಿನ ಫಜೀತಿಪಟ್ಟರೂ ಅವರು ಆಸ್ಪತ್ರೆಗೆ ಧಾವಿಸಬೇಕಾಗಿಲ್ಲ. ನಾರು, ಬೇರು, ಶುಂಠಿ- ಅಮೃತಬಳ್ಳಿ ಕಷಾಯ, ಬೆಚ್ಚಗಿನ ಉಪ್ಪುನೀರಲ್ಲಿ ಬಾಯಿ ಮುಕ್ಕಳಿಸುವುದೇ ಮುಂತಾದ ಮನೆಮದ್ದು ಮಾಡಿಸಿಕೊಳ್ಳುತ್ತ ವಿಶ್ರಾಂತ ಸ್ಥಿತಿಯಲ್ಲಿದ್ದರೆ ಸಾಕು.ಆಂಟಿಬಯಾಟಿಕ್ಸ್ (ಜೀವಿರೋಧಕ ಮಾತ್ರೆ) ಕೂಡ ಬೇಕಾಗುವುದಿಲ್ಲ. ಇನ್ನು ಮೂರನೆಯ ಕೆಟೆಗರಿಯವರು ಆಸ್ಪತ್ರೆಗೆ ಹೋಗಿ ಔಷಧಗಳ ಸಾಗರದಲ್ಲಿ ಮಿಂದೆದ್ದು ನಿಂತು ಗುಣಮುಖರಾಗಿ ಬರುತ್ತಾರೆ.
ತೀರ ಅಪರೂಪಕ್ಕೆ ನೂರರಲ್ಲಿ ಒಬ್ಬಿಬ್ಬರಿಗೆ (ಮಾತ್ರ) ಶ್ವಾಸಕೋಶದಲ್ಲಿ ನೀರು ತುಂಬಿಕೊಂಡು, ಉಸಿರಾಟವೂ ಕಷ್ಟವಾಗಿ, ಕೃತಕ ಉಸಿರಾಟದ ವೆಂಟಿಲೇಟರ್ ಹಾಕಿಸಿಕೊಳ್ಳಬೇಕಾಗುತ್ತದೆ. ಅವರ ವಿಷಯ ಕೊಂಚ ಕಷ್ಟ. ಅಂಥವರಲ್ಲಿ ರೋ.ಶ. ದುರ್ಬಲವಾಗಿರುತ್ತದೆ. ಒಂದೋ ಅವರು ತೀರ ಇಳಿವಯಸ್ಸಿನವರಾಗಿ, ಸಂಸಾರಬಂಧನವನ್ನು ಕಳಚಿಕೊಳ್ಳಲು ಸಿದ್ಧರಾಗಿರಬಹುದು. ಅಥವಾ ಕಿರಿ ವಯಸ್ಸಿನವರಾಗಿದ್ದರೂ ಅವರ ರೋ.ಶ.ಕ್ಕೆ ಜಾಸ್ತಿ ವಯಸ್ಸಾಗಿರಬಹುದು. ಅಂದರೆ, ಈಗಾಗಲೇ ಸ್ಥೂಲ ದೇಹಿಗಳಾಗಿ, ಇಲ್ಲವೆ ಸಕ್ಕರೆ ರೋಗಿಗಳಾಗಿ, ಅಥವಾ ಹೃದಯಸಂಬಂಧೀ ಕಾಯಿಲೆಯವರಾಗಿ ಅಥವಾ ಬೀಡಿ-ಸಿಗರೇಟು ಚಟದಿಂದಾಗಿ ಅವರ ಶ್ವಾಸಕೋಶ ಸಾಕಷ್ಟು ಆಗಲೇ ಸುಸ್ತಾಗಿರಬಹುದು. ಅಂಥವರು ಹುಷಾರಾಗಿರಬೇಕು.
ಹಾಗೆಂದು ಕೊರೊನಾ ಬಂತೆಂದು ಅವರೂ ತೀರ ಗಾಬರಿ ಪಡಬೇಕಿಲ್ಲ. ಫ್ರಾನ್ಸಿನ ಪಾಶ್ಚರ್ ಸಂಶೋಧನಾ ಸಂಸ್ಥೆಯ ತಜ್ಞರ 2018ರ ಅಧ್ಯಯನದ ಪ್ರಕಾರ, ಚಿಕ್ಕಂದಿನಿಂದ ನಾನಾ ಬಗೆಯ ವೈರಾಣು, ಬ್ಯಾಕ್ಟೀರಿಯಾ, ಜಂತುಹುಳುವಿನ ಬಾಧೆಯನ್ನು ಎದುರಿಸಿದ ದೇಹದಲ್ಲಿ ಸಾಕಷ್ಟು ಬಗೆಯ ಶಸ್ತ್ರಾಸ್ತ್ರಗಳು ಜಮಾ ಆಗಿರುತ್ತವೆ. ಒಂದಲ್ಲ ಒಂದು ಶಸ್ತ್ರದಿಂದ ಕೊರೊನಾ ಕೂಡ ಹಿಮ್ಮೆಟ್ಟಬಹುದು. ಆದರೆ ಬಾಲ್ಯದಿಂದಲೂ ತೀರ ಶುಚಿಯಾದ ನೀರು, ತೀರ ಶುದ್ಧಾತಿಶುದ್ಧ ಆಹಾರ ಸೇವಿಸುತ್ತ ಶುದ್ಧೋದನನ ಅರಮನೆಯ ಮಕ್ಕಳಂತೆ ಬೆಳೆದಿದ್ದರೆ ಅಂಥವರ ದೇಹದಲ್ಲಿ ರೋಗನಿರೋಧಕ ಶಸ್ತ್ರಾಸ್ತ್ರಗಳ ಸಂಖ್ಯೆ ಕಡಿಮೆ ಇರುತ್ತದೆ. (ಯುರೋಪ್ ಅಮೆರಿಕದಲ್ಲಿ ಎಷ್ಟೆಲ್ಲ ಜನರನ್ನು ಕೋವಿಡ್ ಕೊಲ್ಲುತ್ತಿದೆ.) ಇದೀಗ ಬಂದ ಮಾಹಿತಿಯ ಪ್ರಕಾರ, ಬಾಲ್ಯದಲ್ಲಿ ಕ್ಷಯನಿರೋಧಕ ಬಿಸಿಜಿ ಚುಚ್ಚುಮದ್ದನ್ನು ಹಾಕಿಸಿಕೊಂಡಿದ್ದರೆ ಅಂಥವರಿಗೆ ಕೊರೊನಾ ಅಷ್ಟಾಗಿ ಬಾಧಿಸುವುದಿಲ್ಲವಂತೆ. ಭಾರತ, ಜಪಾನ್ ಮುಂತಾದ ಕೆಲವೇ ದೇಶಗಳಲ್ಲಿ ಹಿಂದೆಲ್ಲ ಬಿಸಿಜಿ ಕಡ್ಡಾಯವಾಗಿತ್ತು. ಇಂಥ ದೇಶಗಳಲ್ಲಿ ಕೊರೊನಾ ಕುಣಿದಾಟ ಇದುವರೆಗೆ ಕಡಿಮೆ ಇದೆ.
ಇವೆಲ್ಲಕ್ಕಿಂತ ಮುಖ್ಯವಾಗಿ ರೋ.ಶ. ನಮ್ಮನಮ್ಮ ಜೀನ್ಸ್ ಅಂದರೆ ರಕ್ತಗುಣದಲ್ಲಿ ಬಂದಿರುತ್ತದೆ. ನಮ್ಮ ತಾತ, ಮುತ್ತಜ್ಜಿಯರು ಎಷ್ಟೆಷ್ಟು ಬಗೆಯ ರೋಗಗಳನ್ನು ಎದುರಿಸಿ ಬದುಕಿದ್ದರಿಂದಲೇ ನಾವು ಇಂದು ಇಲ್ಲಿದ್ದೇವೆ. ಯುರೋಪ್ ಅಮೆರಿಕದಂತಹ ಚಳಿಪ್ರದೇಶಗಳಲ್ಲಿ ಹಿಂದಿನ ಕಾಲದಲ್ಲೂ ರೋಗಾಣುಗಳ ಸಂಖ್ಯೆ ತೀರ ಕಮ್ಮಿ ಇತ್ತು. ಹಿಮಪ್ರದೇಶಗಳಲ್ಲಿ ಸೊಳ್ಳೆ ಕೂಡ ಇರುವುದಿಲ್ಲ. ಹಾಗಾಗಿ ಅವರ ವಂಶಗುಣದಲ್ಲಿ ರೋ.ಶ. ಸಹಜವಾಗಿ ಕಡಿಮೆ ಇತ್ತು. ಆದ್ದರಿಂದಲೇ ಪ್ಲೇಗು, ಸಿಡುಬಿನಂಥ ಕಾಯಿಲೆಗಳು ಬಂದೆರಗಿದಾಗ ಅಲ್ಲಿಯ ಜನರು ಅಕ್ಷರಶಃ ಹುಳಗಳಂತೆ ಸಾಯುತ್ತಿದ್ದರು.
ಈಗಲೂ ಸಾಮಾನ್ಯ ನೆಗಡಿ ಜ್ವರಕ್ಕೇ ಅಮೆರಿಕದಲ್ಲಿ ದಿನಕ್ಕೆ ಸರಾಸರಿ ನೂರು ಜನರು (ಹೌದು, ಪ್ರತಿದಿನಕ್ಕೆ ನೂರು; ವರ್ಷಕ್ಕೆ 36ಸಾವಿರ ಜನರು) ಸಾಯುತ್ತಾರೆ. ಅದಕ್ಕೆ ಲಸಿಕೆ ಪಸಿಕೆ,ನೂರೊಂದು ಔಷಧಗಳು ಇದ್ದರೂ ಫ್ಲೂ ರೋಗಾಣು ಅಷ್ಟೊಂದು ಜನರನ್ನು ಬಲಿ ತೆಗೆದುಕೊಳ್ಳುತ್ತಿದೆ. ಅವರ ದುರದೃಷ್ಟಕ್ಕೆ ಈಗಿನ ಈ ಕೊರೊನಾ ಕೂಡ ಚಳಿಮಂಜಿನ ದಿನಗಳಲ್ಲಿ (ಉಷ್ಣತೆ 7ರಿಂದ 25 ಡಿಗ್ರಿ ಸೆ. ಇದ್ದಲ್ಲಿ) ತುಂಬ ಉಗ್ರವಾಗಿರುತ್ತದೆ. ವೈರಾಣುಗಳು ಪಬ್ಗಳಲ್ಲಿ, ಸೂಪರ್ ಬಝಾರ್ಗಳಲ್ಲಿ ಬಾಗಿಲ ಹಿಡಿಕೆಗಳ ಮೇಲೆ, ಎಸ್ಕಲೇಟರಿನ ಜಾರುಪಟ್ಟಿಯ ಮೇಲೆ, ಲಿಫ್ಟ್ ಎಂಬ ಏರುಬಂಡಿಯಲ್ಲಿರುವ ಬಟನ್ಗಳ ಮೇಲೆ ಹೆಚ್ಚಿನ ಅವಧಿಯಲ್ಲಿ ಜೀವಂತವಾಗಿ ಕೂತಿರುತ್ತವೆ. ಪಾರ್ಕಿನಲ್ಲಿ, ಫುಟ್ಪಾತ್ ನಲ್ಲಿ, ರೈಲಿನಲ್ಲಿ, ಲಿಫ್ಟ್ನಲ್ಲಿ ಆಲಿಂಗನ, ಚುಂಬನ ಇದ್ದಲ್ಲಂತೂ ವೈರಾಣುವಿಗೆ ಮಜವೋ ಮಜ!
ನಮ್ಮ ದೇಹ, ನಮ್ಮ ದೇಶ ಎರಡೂ ಗಟ್ಟಿಮುಟ್ಟಾಗಿದೆ. ಇಲ್ಲಿ ಬೇಸಿಗೆ ಉಗ್ರವಾಗಿದೆ, ವೈರಾಣುವಿನ ಉಗ್ರತೆಯನ್ನು ಗಾಳಿಯೇ ಕಮ್ಮಿ ಮಾಡಿರುತ್ತದೆ. ಜೊತೆಗೆ ಇಲ್ಲಿನ ಹತ್ತಾರು, ಅಷ್ಟೇಕೆ ನೂರಾರು ಬಗೆಯ ರೋಗಾಣುಗಳ ಸಂತೆಯನ್ನೇ ನೋಡಿ ಕೊರೊನಾ ಇನ್ನಷ್ಟು ನರ್ವಸ್ ಆಗಲೂ ಬಹುದು. ಆ ಸಂತೆಯಲ್ಲಿ ಓಡಾಡುತ್ತ ನಾವು ನಮ್ಮ ದೇಹದಲ್ಲಿ ಎಷ್ಟೊಂದು ರೋ.ಶ. ಶಸ್ತ್ರಾಸ್ತ್ರಗಳನ್ನು ಪೇರಿಸಿಕೊಂಡಿದ್ದೇವೆ. ಅಮೆರಿಕದಲ್ಲಿ ಫ್ಲೂ ರೋಗದಿಂದ ಸಾಯುವವರ ಸಂಖ್ಯೆಯನ್ನು ನೆನಪಿಸಿಕೊಳ್ಳಿ. ನಾವೂ ವರ್ಷಕ್ಕೆ ಎಷ್ಟೊಂದು ಬಾರಿ ಫ್ಲೂ-ನೆಗಡಿ ಎದುರಿಸುವುದಿಲ್ಲ? ನಮ್ಮಲ್ಲಿ ನೆಗಡಿಜ್ವರದ ಸಾವಿನ ಸಂಖ್ಯೆ ಅಮೆರಿಕದ ಹತ್ತರಲ್ಲೊಂದು ಪಾಲೂ ಇಲ್ಲ.
ಆದರೂ ನಾವು ಎಚ್ಚರದಿಂದಿರಬೇಕು. ಯಾಕೆ ಗೊತ್ತೆ? ನಮ್ಮೊಳಗಿನ ರೋ.ಶ.ಕ್ಕೆ ಒಂದು ಸಣ್ಣ ದೌರ್ಬಲ್ಯವೂ ಇದೆ. ನಮ್ಮ ಮನಸ್ಸು ಅಧೀರವಾದರೆ, ನಾವು ಧೈರ್ಯಗುಂದಿದರೆ ಈ ರೋ.ಶ. ಕೂಡ ನರ್ವಸ್ ಆಗುತ್ತದೆ. ಬೇಕಿದ್ದರೆ ಯಾವುದೇ ಮನೋವಿಜ್ಞಾನಿಗಳನ್ನು ಕೇಳಿ ನೋಡಿ. ಮನೋಬಲಕ್ಕೂ ದೇಹಬಲಕ್ಕೂ ನೇರಸಂಬಂಧ ಇದೆ.
ಮಾಧ್ಯಮಗಳ ಈ ಬಗೆಯ ಡೋಲು ತಮಟೆಯ ಅಬ್ಬರದಿಂದಾಗಿ ನಮ್ಮ ಆತ್ಮವಿಶ್ವಾಸ, ನಮ್ಮ ರೋಗನಿರೋಧಕ ಶಕ್ತಿ ಕೂಡ ಕುಂದಬಹುದು. ಟಿವಿ ನೋಡುತ್ತ ಕೂತಂತೆ ಗಂಟಲಲ್ಲಿ ಸಣ್ಣ ಕೆರೆತವೂ ದೊಡ್ಡದಾಗಿ, ಸಣ್ಣ ಆಕ್ಷೀ ಕೂಡ ದೊಡ್ಡ ಸೀನನ್ನೇ ಸೃಷ್ಟಿ ಮಾಡಿ ನಮ್ಮನ್ನು ಮತ್ತು ಇಡೀ ಕುಟುಂಬವನ್ನು ತಬ್ಬಿಬ್ಬು ಮಾಡುತ್ತದೆ. ನಮ್ಮೊಳಗಿನ ರೋ.ಶ. ‘’ತೋಳ ಬಂತಲೇ ತೋಳ’’ದ ಕತೆಯಂತೆ ಮತ್ತೆ ಮತ್ತೆ ಧಿಗ್ಗನೆದ್ದು ಮತ್ತೆ ಮತ್ತೆ ಹೈರಾಣಾಗಿ ಮುದುಡುತ್ತದೆ.
ಅಷ್ಟೇ ಅಲ್ಲ, ಕಣ್ಣಿಗೆ ರಾಚುವ ಪ್ರತಿಯೊಂದು ಮುಖವಾಡವೂ ಕೊರೊನಾವನ್ನು ಸಂಕೇತಿಸುತ್ತದೆ. ಸಮಾಜದಲ್ಲಿ ಮುಗುಳ್ನಗೆಯೇ ಮರೆತಂತಾಗಿದೆ. ಭಯ, ಅಧೀರತೆ ಎಲ್ಲೆಲ್ಲೂ ತಾಂಡವವಾಡತೊಗಿದೆ. ಕೊರೊನಾ ಕೌರವ ಪಡೆಯನ್ನು ಕಂಡಾಕ್ಷಣ ಅಸಲೀ ಕದನ ಆರಂಭವಾಗುವ ಮೊದಲೇ ನಾವು ಉತ್ತರ ಕುಮಾರರಾಗುತ್ತಿದ್ದೇವೆ. ಅರ್ಜುನ ಅವಿತಿರುತ್ತಾನೆ.
ಕೊರೊನಾ ವೈರಾಣು ಜಾಣ. ವಿಮಾನ ಏರಿದರೆ ಜೆಟ್ ವೇಗದಲ್ಲಿ ಚಲಿಸಬಹುದು ಎಂಬುದು ಅದಕ್ಕೆ ಗೊತ್ತಾಗಿದೆ. ಯುರೋಪ್, ಅಮೆರಿಕಕ್ಕೆ ಹೋದರೆ ಪುಷ್ಕಳ ಬೇಟೆ ಸಿಗುತ್ತದೆ ಎಂಬುದೂ ಅದಕ್ಕೆ ಗೊತ್ತಿದೆ. ಹೇಗೂ ಮೀಡಿಯಾ ತನ್ನ ಸ್ವಾಗತಕ್ಕೆ ತುತ್ತೂರಿ ದುಂದುಭಿ ಮೊಳಗಿಸುತ್ತ, ಕಂಡಕಂಡವರಿಗೆ ಮುಖವಾಡ ತೊಡಿಸುತ್ತ, ಸಮೂಹಸನ್ನಿಯನ್ನು ಸೃಷ್ಟಿಸಿ ಇಡೀ ನಾಗರಿಕತೆಯ ಜಂಘಾಬಲವನ್ನೇ ಉಡುಗಿಸುತ್ತಿದೆ. ವಿಮಾನಗಳನ್ನು ನೆಲಕ್ಕಿಳಿಸಿ, ಹೈಸ್ಪೀಡ್ ರೈಲುಗಳನ್ನು, ಕಾರುಗಳನ್ನು ಹಡಗುಗಗಳನ್ನು ನಿಂತಲ್ಲೇ ನಿಲ್ಲಿಸಿದ್ದಷ್ಟೇ ಅಲ್ಲ, ಲಕ್ಷುರಿ ಕಾರುಗಳನ್ನು ತಯಾರಿಸುತ್ತಿದ್ದ ಜಿಎಮ್, ಫೋರ್ಡ್, ಟಾಟಾ ಮಹೀಂದ್ರಗಳೆಲ್ಲ ತಮ್ಮ ಕಾರ್ಖಾನೆಗಳಲ್ಲಿ ವೆಂಟಿಲೇಟರ್ಗಳನ್ನೂ ಟೆಸ್ಟಿಂಗ್ ಕಿಟ್ಗಳನ್ನೂ ತಯಾರಿಸಲು ತೊಡಗುವಂತೆ ಮಾಡಿದೆ. ಮಹಾನ್ ರಾಷ್ಟ್ರನಾಯಕರುಗಳನ್ನು ಟಿವಿ ಕ್ಯಾಮರಾಗಳ ಎದುರಿಗೆ ತಂದು ನಿಲ್ಲಿಸಿದೆ.
ಈ ಮಹಾನ್ ನಾಯಕರುಗಳಿಗೆ ಕೊರೊನಾ ಒಂದು ಹೊಸ ಪಾಠವನ್ನು ಕಲಿಸುತ್ತಿದೆ. ರಾಷ್ಟ್ರ ರಕ್ಷಣೆ ಎಂದರೆ ಕೇವಲ ಅಣ್ವಸ್ತ್ರಗಳನ್ನೋ ಫೈಟರ್ ಜೆಟ್ಗಳನ್ನೋ ಸಬ್ಮರೀನ್ಗಳನ್ನೋ ಪೇರಿಸುವುದಷ್ಟೇ ಅಲ್ಲ; ಸಮುದಾಯ ಆರೋಗ್ಯ, ಗುಣಮಟ್ಟದ ಔಷಧ, ಕೈಗೆಟಕುವ ಮಟ್ಟದಲ್ಲಿ ಸುಸಜ್ಜಿತ ಆಸ್ಪತ್ರೆ, ಸಮರ್ಪಣ ಮನೋಭಾವದ ಸ್ವಾಸ್ಥ್ಯ ಸಿಬ್ಬಂದಿ ಕೂಡ ರಕ್ಷಣೆಯ ಭಾಗವೇ ಆಗಬೇಕೆಂಬುದನ್ನು ಅದು ಕಲಿಸುತ್ತಿದೆ.
ಹಾಗೆಯೇ ನಗರಗಳಿಂದ ಗುಳೆಹೊರಟ ಬರಿಹೊಟ್ಟೆಯ, ಖಾಲಿ ಕಿಸೆಯ, ಬೊಬ್ಬೆಗಾಲಿನ ಶ್ರಮಜೀವಿಗಳ ಮೂಲಕ ಅದು ಸರಕಾರಗಳಿಗೆ ಇನ್ನೂ ಒಂದು ಪಾಠವನ್ನು ಕಲಿಸುತ್ತಿದೆ. ರಾಷ್ಟ್ರದ ಘನತೆ ಎಂದರೆ ಕೇವಲ ಥಳಥಳಿಸುವ ಐಟಿ ಪಾರ್ಕ್, ಏರ್ಪೋರ್ಟ್, ಭರ್ಜರಿ ಹೈವೇ, ಪೆಟ್ರೋಲ್ ಬಂಕ್ ಇದ್ದರೆ ಸಾಲದು; ಊರೂರಲ್ಲಿ ನೆರಳಿಗೆ ಒಂದಿಷ್ಟು ಗಿಡಮರಗಳು, ತುರ್ತು ಆಸರೆಗೆ ಉತ್ತಮ ಶಾಲೆ ಇರಬೇಕು, ಶುದ್ಧ ನೀರು-ಶೌಚದ ವ್ಯವಸ್ಥೆ ಇರಬೇಕು. ಕಡೇಪಕ್ಷ ರಕ್ತಸೋರುವ ಕಾಲುಗಳಿಗೆ ಬ್ಯಾಂಡೇಜ್ ಪಟ್ಟಿ ಸಿಗುವಂಥ ಪ್ರಾಥಮಿಕ ಶುಶ್ರೂಷೆಯ ಸೌಲಭ್ಯ ಇರಬೇಕು ಎಂದು ಅದು ಹೇಳುತ್ತಿದೆ.
ಮುಂದಿನ ಗಣರಾಜ್ಯದ ಪರೇಡ್ನಲ್ಲಿ ಮಿಲಿಟರಿ ಫೇರಿಗಿಂತ ಮುಂಚೂಣಿಯಲ್ಲಿ ಸುಸಜ್ಜಿತ ಆಸ್ಪತ್ರೆಯ, ಸುಸಜ್ಜಿತ ಶಾಲೆಯ ಮೆರವಣಿಗೆಯ ವ್ಯವಸ್ಥೆ ಮಾಡಿ ಎಂದು ಅದು ಹೇಳುತ್ತಿದೆಯೇನೊ.ಇದನ್ನೆಲ್ಲ ಅಳೆದು ತೂಗಿ ನೋಡಿದರೆ, ಪ್ರಾಯಶಃ ಕೊರೊನಾಕ್ಕೆ ನಾವು ಶಾಪ ಹಾಕಬೇಕಿಲ್ಲ. ಅದನ್ನು ಮೆರೆಸಿ ಕುಣಿಸುತ್ತಿರುವ ಮಾಧ್ಯಮವನ್ನೂ ಶಪಿಸಬೇಕಿಲ್ಲ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
Mysuru Dasara Elephants: ದಸರಾ ಗಜಪಡೆಯ ತೂಕ ಪರೀಕ್ಷೆ: ಶ್ರೀಕಂಠ ಭಾರೀ ಗಜ, ಏಕಲವ್ಯಕ್ಕೆ 2ನೇ ಸ್ಥಾನ; ಅಂಬಾರಿ ಆನೆ ಆಯ್ಕೆ ಇನ್ನೂ ಬಾಕಿ
ಸುದ್ದಿದಿನ,ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಮೊದಲ ಹಂತದಲ್ಲಿ ಆಗಮಿಸಿರುವ 9 ಆನೆಗಳಿಗೆ ಸಾಂಪ್ರದಾಯಿಕ ತೂಕ ಪರೀಕ್ಷೆ ನಡೆಸಲಾಗಿದೆ. ಈ ಬಾರಿ ಮತ್ತಿಗೋಡು ಶಿಬಿರದ 57 ವರ್ಷದ ಶ್ರೀಕಂಠ 5,790 ಕೆಜಿ ತೂಕದೊಂದಿಗೆ ಗಜಪಡೆಯಲ್ಲೇ ಅತ್ಯಂತ ಭಾರವಾದ ಆನೆಯಾಗಿ ಮೊದಲ ಸ್ಥಾನ ಪಡೆದುಕೊಂಡಿದ್ದಾನೆ. ಭೀಮನಕಟ್ಟೆ ಶಿಬಿರದ 41 ವರ್ಷದ ಏಕಲವ್ಯ 5,600 ಕೆಜಿ ತೂಗಿ ಎರಡನೇ ಸ್ಥಾನದಲ್ಲಿದ್ದಾನೆ.
ನಗರದ ಧನ್ವಂತರಿ ರಸ್ತೆಯಲ್ಲಿರುವ ಎಲೆಕ್ಟ್ರಾನಿಕ್ ವೇ ಬ್ರಿಡ್ಜ್ನಲ್ಲಿ ಭಾನುವಾರ ಬೆಳಗ್ಗೆ ಎಲ್ಲ 9 ಆನೆಗಳ ತೂಕ ಪರೀಕ್ಷೆ ನಡೆಸಲಾಯಿತು. ಕಳೆದ ವರ್ಷ ಭೀಮ ಮತ್ತು ಅಭಿಮನ್ಯು ಕ್ರಮವಾಗಿ ಮೊದಲ ಎರಡು ಸ್ಥಾನದಲ್ಲಿದ್ದರು. ಆದರೆ ಈ ಬಾರಿ ಇವರಿಬ್ಬರನ್ನೂ ದಸರಾಗೆ ಕರೆತಂದಿಲ್ಲ. ಹೀಗಾಗಿ ಶ್ರೀಕಂಠನ ತೂಕವೇ ಈ ವರ್ಷದ ಗಜಪಡೆಯ ಗಮನ ಸೆಳೆದಿದೆ.
ಹೈಲೈಟ್ಸ್: 57 ವರ್ಷದ ಶ್ರೀಕಂಠನೇ ಗಜಪಡೆಯ ತೂಕದ ಬಾದ್ಷಾ |
|
http://Visit : www.suddidina.com
ಗಂಡಾನೆಗಳ ತೂಕ 5 ಸಾವಿರ ಕೆಜಿಗೂ ಅಧಿಕ
ಈ ಬಾರಿಯ ಮೊದಲ ಹಂತದ ಗಜಪಡೆಯ ವಿಶೇಷತೆಯೆಂದರೆ ಬಹುತೇಕ ಗಂಡಾನೆಗಳು 5 ಸಾವಿರ ಕೆಜಿಗೂ ಹೆಚ್ಚು ತೂಕ ಹೊಂದಿರುವುದು. ಆದರೆ ಆನೆಗಳ ತೂಕ ಹೆಚ್ಚಿಸುವುದೇ ಅರಣ್ಯ ಇಲಾಖೆಯ ಮುಖ್ಯ ಗುರಿಯಲ್ಲ. ಬದಲಿಗೆ ಅವುಗಳ ಆರೋಗ್ಯ, ದೈಹಿಕ ಸಾಮರ್ಥ್ಯ ಮತ್ತು ತಾಲೀಮಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.
ಡಿಸಿಎಫ್ ಡಾ. ಐ.ಬಿ. ಪ್ರಭುಗೌಡ ಅವರ ಪ್ರಕಾರ, ಆನೆಗಳ ತೂಕದ ಆಧಾರದ ಮೇಲೆ ಅವುಗಳಿಗೆ ನೀಡಬೇಕಾದ ಆಹಾರದ ಪ್ರಮಾಣ ಮತ್ತು ಪೌಷ್ಟಿಕ ಆಹಾರವನ್ನು ನಿರ್ಧರಿಸಲಾಗುತ್ತದೆ. ಪ್ರತಿಯೊಂದು ಆನೆಯ ದೈಹಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ತಾಲೀಮು ರೂಪಿಸಲಾಗುತ್ತದೆ.
9 ಆನೆಗಳ ತೂಕದ ಆಧಾರದಲ್ಲೇ ಆಹಾರ
ದಸರಾ ಗಜಪಡೆಯಲ್ಲಿರುವ ಆನೆಗಳ ಆರೋಗ್ಯ ಕಾಪಾಡುವುದು ಪ್ರಮುಖ ಆದ್ಯತೆಯಾಗಿದೆ. ತೂಕ ಪರೀಕ್ಷೆಯ ಮೂಲಕ ಆನೆಗಳ ದೈಹಿಕ ಸ್ಥಿತಿಯ ಬಗ್ಗೆ ಅಗತ್ಯ ಮಾಹಿತಿ ಪಡೆಯಲಾಗುತ್ತದೆ. ಅದರ ಆಧಾರದ ಮೇಲೆ ಪೌಷ್ಟಿಕ ಆಹಾರ, ದಿನನಿತ್ಯದ ಚಟುವಟಿಕೆ ಹಾಗೂ ತಾಲೀಮಿನಲ್ಲಿ ಅಗತ್ಯ ಬದಲಾವಣೆ ಮಾಡಲಾಗುತ್ತದೆ.
ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಈಗಿರುವ ಎಲ್ಲ ಆನೆಗಳೂ ಅಂಬಾರಿ ಹೊರುವ ಸಾಮರ್ಥ್ಯ ಹೊಂದಿವೆ. ಅನುಭವಿ ಆನೆಗಳಾಗಿರುವುದರಿಂದ ಅಂತಿಮ ತಾಲೀಮು ಅತ್ಯಂತ ಮಹತ್ವ ಪಡೆಯಲಿದೆ.
ಅಂಬಾರಿ ಆನೆ ಯಾರು? ಕುತೂಹಲ
ಈ ಬಾರಿಯ ದಸರಾ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುವ ಆನೆ ಯಾರು ಎಂಬ ಕುತೂಹಲ ಈಗಾಗಲೇ ಹೆಚ್ಚಾಗಿದೆ. ಕೇವಲ ತೂಕದ ಆಧಾರದ ಮೇಲೆ ಅಂಬಾರಿ ಆನೆಯನ್ನು ಆಯ್ಕೆ ಮಾಡುವುದಿಲ್ಲ. ಆನೆಯ ಆರೋಗ್ಯ, ಸಾಮರ್ಥ್ಯ, ಅನುಭವ, ತಾಲೀಮು ಮತ್ತು ಅಂತಿಮ ಹಂತದ ಪ್ರದರ್ಶನವನ್ನು ಪರಿಗಣಿಸಿ ಆಯ್ಕೆ ಮಾಡಲಾಗುತ್ತದೆ.
ಮೊದಲ ಹಂತದ ತಾಲೀಮು ಮುಗಿದ ಬಳಿಕ ನಡೆಯುವ ಅಂತಿಮ ತಾಲೀಮಿನ ನಂತರವೇ ಚಿನ್ನದ ಅಂಬಾರಿ ಹೊರುವ ಆನೆಯನ್ನು ಅಂತಿಮಗೊಳಿಸಲಾಗುತ್ತದೆ. ಹೀಗಾಗಿ ಶ್ರೀಕಂಠ ತೂಕದಲ್ಲಿ ನಂಬರ್ 1 ಆಗಿದ್ದರೂ, ಅಂಬಾರಿ ವಿಚಾರದಲ್ಲಿ ಅಂತಿಮ ನಿರ್ಧಾರ ಇನ್ನೂ ಬಾಕಿಯಿದೆ.
ಆನೆಗಳ ಬಳಿ ಸಾರ್ವಜನಿಕರಿಗೆ ನಿರ್ಬಂಧ
ದಸರಾ ಆನೆಗಳ ವೀಕ್ಷಣೆಗೆ ಯಾವುದೇ ಟಿಕೆಟ್ ವ್ಯವಸ್ಥೆ ಮಾಡಿಲ್ಲ ಎಂದು ಡಿಸಿಎಫ್ ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರು ಆನೆಗಳ ಬಳಿ ತೆರಳದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ದಸರಾ ಆನೆಗಳ ಕುರಿತು ಸುಳ್ಳು ಮಾಹಿತಿ ಹರಡಿದರೆ ಕ್ರಮ ಕೈಗೊಳ್ಳುವುದಾಗಿಯೂ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.
“ಆನೆಗಳಿಗೆ ಹಂತ ಹಂತವಾಗಿ ತಾಲೀಮು ಮಾಡಲಾಗುತ್ತದೆ. ಸದ್ಯಕ್ಕೆ ಎಲ್ಲ ಆನೆಗಳ ಆರೋಗ್ಯ ಚೆನ್ನಾಗಿದೆ. ಅಂತಿಮ ಹಂತದ ತಾಲೀಮಿನ ಬಳಿಕ ಅಂಬಾರಿ ಹೊರುವ ಆನೆ ಆಯ್ಕೆ ಮಾಡಲಾಗುವುದು.”
– ಡಾ.ಐ.ಬಿ.ಪ್ರಭುಗೌಡ, ಡಿಸಿಎಫ್
ದಸರಾ ಗಜಪಡೆಯ ತೂಕದ ವಿವರ
- ಶ್ರೀಕಂಠ: 5,790 ಕೆಜಿ
- ಏಕಲವ್ಯ: 5,600 ಕೆಜಿ
- ಧನಂಜಯ: 5,530 ಕೆಜಿ
- ಮಹೇಂದ್ರ: 5,490 ಕೆಜಿ
- ಪ್ರಶಾಂತ: 5,205 ಕೆಜಿ
- ಗೋಪಿ: 5,170 ಕೆಜಿ
- ಶ್ರೀರಾಮ: 4,820 ಕೆಜಿ
- ಲಕ್ಷ್ಮೀ: 3,990 ಕೆಜಿ
- ಕಾವೇರಿ: 3,075 ಕೆಜಿ

ದಿನದ ಸುದ್ದಿ
ಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್ಮೆಂಟ್ಗೆ ‘ಡೆಮಾಲಿಷನ್’ ಶುರು!
ಕೂಡ್ಲುಗೇಟ್ನ ಎಸ್ಎನ್ಎನ್ ರಾಜ್ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ
ಸುದ್ದಿದಿನ,ಬೆಂಗಳೂರು: ನಗರದ ಪ್ರಮುಖ ವಸತಿ ಯೋಜನೆಗಳಲ್ಲಿ ಒಂದಾಗಿರುವ ಕೂಡ್ಲುಗೇಟ್ನ ಎಸ್ಎನ್ಎನ್ ಎಸ್ಟೇಟ್ ಒಡೆತನದ 18 ಅಂತಸ್ತಿನ ಕಟ್ಟಡದ ತೆರವು ಕಾರ್ಯಾಚರಣೆ ಶುಕ್ರವಾರದಿಂದ ಆರಂಭವಾಗಿದೆ. ಬೆಂಗಳೂರಿನ ಗಮನ ಸೆಳೆದಿದ್ದ ಈ ಪ್ರಕರಣದಲ್ಲಿ ಎಸ್ಎನ್ಎನ್ ರಾಜ್ ಕಾರ್ಪ್ ಸಂಸ್ಥೆಯು ಎಚ್ಎಸ್ಆರ್ ಲೇಔಟ್ನಲ್ಲಿರುವ ತನ್ನ ಎಸ್ಎನ್ಎನ್ ರಾಜ್ ಎಟರ್ನಿಯಾ ಪ್ರೀಮಿಯಂ ವಸತಿ ಸಂಕೀರ್ಣದ 49 ಅಪಾರ್ಟ್ಮೆಂಟ್ ಘಟಕಗಳನ್ನು ನಿಯಂತ್ರಿತ ರೀತಿಯಲ್ಲಿ ಕೆಡವುವ ಪ್ರಕ್ರಿಯೆಗೆ ಚಾಲನೆ ನೀಡಿದೆ.
ಒಟ್ಟು 972 ಮನೆಗಳನ್ನು ಹೊಂದಿರುವ ಈ ವಸತಿ ಯೋಜನೆಯಲ್ಲಿನ 49 ಘಟಕಗಳ ತೆರವು ಈಗ ಭಾರಿ ಕುತೂಹಲ ಮೂಡಿಸಿದೆ. ಕಟ್ಟಡದ ಸುರಕ್ಷತೆ ಕುರಿತು ತಾಂತ್ರಿಕ ಪರಿಶೀಲನೆ ನಡೆಸಿದ ಬಳಿಕ ಈ ಕ್ರಮಕ್ಕೆ ಮುಂದಾಗಲಾಗಿದೆ.
₹200 ಕೋಟಿ ವೆಚ್ಚದ ಕಟ್ಟಡದಲ್ಲಿ ದೋಷ ಪತ್ತೆ
ಸುಮಾರು ₹200 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕಟ್ಟಡ ಇದಾಗಿದೆ. ತಾಂತ್ರಿಕ ಪರಿಶೀಲನೆ ವೇಳೆ ಕಟ್ಟಡದ ರಚನೆಯಲ್ಲಿ ಹಾನಿಯಾಗಿರುವುದು ಹಾಗೂ ಕಟ್ಟಡ ವಾಲಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ನಿವಾಸಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಟ್ಟಡದ ನಿರ್ದಿಷ್ಟ ಭಾಗಗಳನ್ನು ತೆರವುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.
ತೆರವು ಕಾರ್ಯಾಚರಣೆಯನ್ನು ಯಾವುದೇ ರೀತಿಯ ಆತಂಕ ಅಥವಾ ಅಪಾಯ ಉಂಟಾಗದಂತೆ ಅತ್ಯಂತ ನಿಯಂತ್ರಿತ ರೀತಿಯಲ್ಲಿ ನಡೆಸಲಾಗುತ್ತಿದೆ. ಕಟ್ಟಡ ತೆರವು ಸಂದರ್ಭದಲ್ಲಿ ಸುತ್ತಮುತ್ತಲಿನ ಪ್ರದೇಶಕ್ಕೂ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ
ತೆರವು ಕಾರ್ಯವನ್ನು ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ ನೀಡಲಾಗಿದೆ ಎಂದು ಎಸ್ಎನ್ಎನ್ ಅಪಾರ್ಟ್ಮೆಂಟ್ ನಿರ್ದೇಶಕ ಅನೂಜ್ ತಿಳಿಸಿದ್ದಾರೆ. ಫ್ಲ್ಯಾಟ್ಗಳನ್ನು ಹಂತ ಹಂತವಾಗಿ ತೆರವುಗೊಳಿಸುವ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಈ ಕುರಿತು ಮಾತನಾಡಿರುವ ಅವರು, ಬಿಬಿಎಂಪಿಗೂ ಸಂಸ್ಥೆಯ ವತಿಯಿಂದ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ. ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ತೆರವು ಕಾರ್ಯ ನಡೆಸಲಾಗುವುದು ಎಂಬ ಭರವಸೆಯನ್ನೂ ನೀಡಿದ್ದಾರೆ.
ಅದೇ ಜಾಗದಲ್ಲಿ ಹೊಸ ಅಪಾರ್ಟ್ಮೆಂಟ್ ನಿರ್ಮಾಣ
ಪ್ರಸ್ತುತ ಕಟ್ಟಡದ ತೆರವು ಕಾರ್ಯ ಪೂರ್ಣಗೊಂಡ ಬಳಿಕ ಅದೇ ಜಾಗದಲ್ಲಿ ಹೊಸ ಅಪಾರ್ಟ್ಮೆಂಟ್ ನಿರ್ಮಿಸುವ ಯೋಜನೆ ಇದೆ ಎಂದು ಸಂಸ್ಥೆ ತಿಳಿಸಿದೆ. ಈಗಾಗಲೇ ಕೆಲವು ಫ್ಲ್ಯಾಟ್ಗಳು ಮುಂಗಡವಾಗಿ ಬುಕ್ ಆಗಿದ್ದ ಹಿನ್ನೆಲೆಯಲ್ಲಿ ಖರೀದಿದಾರರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸುವುದಾಗಿ ಸಂಸ್ಥೆ ಹೇಳಿದೆ.
ಯಾರಿಗೂ ತೊಂದರೆಯಾಗದಂತೆ ಸಂಪೂರ್ಣ ಪ್ರಕ್ರಿಯೆ ನಡೆಸುವುದಾಗಿ ಸ್ಪಷ್ಟಪಡಿಸಿರುವ ಸಂಸ್ಥೆ, ನಿವಾಸಿಗಳು ಹಾಗೂ ಖರೀದಿದಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮ ಕೈಗೊಳ್ಳಲಿದೆ.

ದಿನದ ಸುದ್ದಿ
ಪಾಕ್ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ
ಸುದ್ದಿದಿನ,ಜಮ್ಮುಕಾಶ್ಮೀರ: ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಮತ್ತೆ ಡ್ರೋನ್ ಹಾರಾಟದ ಆತಂಕ ಎದುರಾಗಿದೆ. ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್ನಲ್ಲಿ ಪಾಕಿಸ್ತಾನ ಮೂಲದ್ದೆಂದು ಶಂಕಿಸಲಾದ ಡ್ರೋನ್ವೊಂದು ಕಾಣಿಸಿಕೊಂಡಿರುವುದು ಭದ್ರತಾ ಪಡೆಗಳನ್ನು ಅಲರ್ಟ್ ಮಾಡಿದೆ. ಗಡಿಯಾಚೆಯಿಂದ ನಡೆಯಬಹುದಾದ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳನ್ನು ತಡೆಯಲು ಸೇನೆ ಹಾಗೂ ಭದ್ರತಾ ಪಡೆಗಳು ನಿಗಾ ಮತ್ತಷ್ಟು ಬಿಗಿಗೊಳಿಸಿವೆ.
ಹೈಲೈಟ್ಸ್ |
|
http://Visit : www.suddidina.com
ಬೆಹ್ರೂಟಿ ಗ್ರಾಮದ ಬಳಿ ಕಾಣಿಸಿಕೊಂಡ ಶಂಕಿತ ಡ್ರೋನ್
ಶುಕ್ರವಾರ ಸಂಜೆ ಬಾಲಕೋಟೆ ಪ್ರದೇಶದ ಬೆಹ್ರೂಟಿ ಗ್ರಾಮದ ಸಮೀಪ ಆಕಾಶದಲ್ಲಿ ಶಂಕಿತ ಡ್ರೋನ್ ಹಾರಾಟ ನಡೆಸಿರುವುದು ಸ್ಥಳೀಯರ ಹಾಗೂ ಭದ್ರತಾ ಪಡೆಗಳ ಗಮನಕ್ಕೆ ಬಂದಿದೆ. ಬಳಿಕ ಅದು ಮಂಗಲ್ನಾರ್-ದಬ್ರೋಟ್ ಪ್ರದೇಶದತ್ತ, ಅಂದರೆ ಗಡಿ ಪ್ರದೇಶದ ಸಮೀಪಕ್ಕೆ ತೆರಳಿ ಪಾಕಿಸ್ತಾನದ ದಿಕ್ಕಿನಲ್ಲಿ ವಾಪಸ್ ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಡ್ರೋನ್ ಕಾಣಿಸಿಕೊಂಡ ಮಾಹಿತಿ ಸಿಗುತ್ತಿದ್ದಂತೆ LoC ವ್ಯಾಪ್ತಿಯಲ್ಲಿ ಭದ್ರತಾ ಕ್ರಮಗಳನ್ನು ತೀವ್ರಗೊಳಿಸಲಾಗಿದೆ. ಬೆಳಗ್ಗೆಯಿಂದಲೇ ಸರ್ಚ್ ಆಪರೇಷನ್ ಆರಂಭಿಸಲಾಗಿದ್ದು, ಡ್ರೋನ್ ಮೂಲಕ ಯಾವುದೇ ವಸ್ತು, ಶಸ್ತ್ರಾಸ್ತ್ರ ಅಥವಾ ಅನುಮಾನಾಸ್ಪದ ಸಾಮಗ್ರಿಗಳನ್ನು ಕೆಳಗೆ ಇಳಿಸಲಾಗಿದೆಯೇ ಎಂಬುದರ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ.
3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಶೋಧ
ಡ್ರೋನ್ ಆತಂಕದ ನಡುವೆಯೇ ಜಮ್ಮು-ಕಾಶ್ಮೀರದ ಉಧಂಪುರ, ಕಥುವಾ ಮತ್ತು ರಾಜೌರಿ ಜಿಲ್ಲೆಗಳ ವಿಶಾಲ ಅರಣ್ಯ ಪ್ರದೇಶಗಳಲ್ಲೂ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ತೀವ್ರಗೊಳಿಸಿವೆ.
ಉಧಂಪುರ-ಕಥುವಾ ಅರಣ್ಯ ಪ್ರದೇಶದ ಖುಬನ್, ನಾಗೈನ್, ಖ್ಟ್ರೈಲ್, ಗೋಡು ಫಲಾಲ್, ಪದೇತಾರ್, ಚೋರ್ ಮೊಟ್ಟು, ಕಿಯಾ, ಖೇಬಾ, ಭೇದ್, ಮಾರ್ತಾ ಹಾಗೂ ಜೋಫರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪೊಲೀಸರು, ಸೇನೆ ಮತ್ತು ಅರೆಸೇನಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ.
ರಾಜೌರಿಯಲ್ಲಿ ಶಸ್ತ್ರಸಜ್ಜಿತರ ಶಂಕೆ
ರಾಜೌರಿ ಜಿಲ್ಲೆಯ ಗೈಬಾಸ್, ಮಿಥಿಯಾನಿ, ಮೊಗ್ಲಾ ಮತ್ತು ನಾರ್ಲಾ ಪ್ರದೇಶಗಳಲ್ಲೂ ಪ್ರತ್ಯೇಕ ಸರ್ಚ್ ಆಪರೇಷನ್ ಕೈಗೊಳ್ಳಲಾಗಿದೆ. ಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳು ಸಂಚರಿಸುತ್ತಿರುವುದನ್ನು ಗ್ರಾಮಸ್ಥರು ಗಮನಿಸಿ ಭದ್ರತಾ ಪಡೆಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಮಾಹಿತಿ ಆಧರಿಸಿ ಭದ್ರತಾ ಪಡೆಗಳು ವ್ಯಾಪಕ ಶೋಧ ನಡೆಸಿದರೂ, ಇದುವರೆಗೆ ಯಾವುದೇ ಶಂಕಿತ ವ್ಯಕ್ತಿಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಡಿಯಲ್ಲಿ ಹೆಚ್ಚಿದ ಕಣ್ಗಾವಲು
ಡ್ರೋನ್ ಹಾರಾಟ ಹಾಗೂ ಅರಣ್ಯ ಪ್ರದೇಶಗಳಲ್ಲಿ ಶಂಕಿತ ವ್ಯಕ್ತಿಗಳ ಚಲನವಲನದ ಮಾಹಿತಿ ಹಿನ್ನೆಲೆಯಲ್ಲಿ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೂ ತಕ್ಷಣ ಮಾಹಿತಿ ನೀಡುವಂತೆ ಸ್ಥಳೀಯರಿಗೂ ಸೂಚನೆ ನೀಡಲಾಗಿದೆ.
ಪ್ರಸ್ತುತ ಕಾರ್ಯಾಚರಣೆಯ ಪ್ರಮುಖ ಉದ್ದೇಶ ಗಡಿಯಾಚೆಯಿಂದ ಸಂಭವಿಸಬಹುದಾದ ಒಳನುಸುಳುವಿಕೆ ಅಥವಾ ಅನುಮಾನಾಸ್ಪದ ಸಾಗಾಟವನ್ನು ತಡೆಯುವುದು ಮತ್ತು ಪ್ರದೇಶದಲ್ಲಿ ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದಾಗಿದೆ.

-
ದಿನದ ಸುದ್ದಿ5 days agoಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್ಮೆಂಟ್ಗೆ ‘ಡೆಮಾಲಿಷನ್’ ಶುರು!
-
ದಿನದ ಸುದ್ದಿ5 days agoಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!
-
ದಿನದ ಸುದ್ದಿ5 days agoವಾಲ್ಮೀಕಿ ಹಗರಣದ ಕಿಡಿ ಮತ್ತೆ ಬಳ್ಳಾರಿಯಲ್ಲಿ: ನಾಗೇಂದ್ರ ವಿರುದ್ಧ ಜನಾರ್ಧನ ರೆಡ್ಡಿ ವಾಗ್ದಾಳಿ, ಕಾಂಗ್ರೆಸ್ಗೆ ರಾಜೀನಾಮೆ ಸವಾಲು!
-
ದಿನದ ಸುದ್ದಿ5 days agoವೈದ್ಯಕೀಯ ಕಾಲೇಜುಗಳ ಹಾಸ್ಟೆಲ್ ಕ್ಯಾಂಟೀನ್ಗಳಿಗೆ ಅಧಿಕಾರಿಗಳ ಶಾಕ್! 34 ಕ್ಯಾಂಟೀನ್ ಪರಿಶೀಲನೆ, 5ಕ್ಕೆ ನೋಟಿಸ್
-
ದಿನದ ಸುದ್ದಿ2 days agoಬಿಜೆಪಿ ರೈತ ಮೋರ್ಚಾದಿಂದ ಬಂದ್ಗೆ ಕರೆ; ಹಲವು ವೃತ್ತಗಳಲ್ಲಿ ಟೈರ್ಗೆ ಬೆಂಕಿ, ಬೆಂಕಿ ನಂದಿಸಿದ ಪೊಲೀಸರು
-
ದಿನದ ಸುದ್ದಿ5 days agoTrump Oil Deal: ವೆನೆಜುವೆಲಾದ 65 ಬಿಲಿಯನ್ ಬ್ಯಾರೆಲ್ ತೈಲದ ಮೇಲೆ ಅಮೆರಿಕದ ಕಣ್ಣು; ಇದು ವಿಶ್ವದ ಅತಿದೊಡ್ಡ ಡೀಲ್ನಾ?
-
ದಿನದ ಸುದ್ದಿ5 days agoಪಾಕ್ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ
-
ದಿನದ ಸುದ್ದಿ3 days agoಕುಂದುಕೊರತೆಗಳಿಗೆ ತ್ವರಿತ ಪರಿಹಾರ ನೀಡಲು ಏಕೀಕೃತ ವ್ಯವಸ್ಥೆ; ಶನಿವಾರ ಜನಸಂಪರ್ಕ, ಬುಧವಾರ ಮೂರು ಹಂತದ ಪರಿಶೀಲನೆ


