ದಿನದ ಸುದ್ದಿ
ಫೆಬ್ರವರಿ 17 ಮತ್ತು 18ಕ್ಕೆ ಕಲಬುರಗಿಯಲ್ಲಿ ಮೀಡಿಯಾ ಫೆಸ್ಟ್-2025
ಸುದ್ದಿದಿನ,ಕಲಬುರಗಿ:ಕಲ್ಯಾಣ ಕರ್ನಾಟಕದ ಕೇಂದ್ರಸ್ಥಾನ ಕಲಬುರಗಿಯಲ್ಲಿ ಇದೇ ಮೊದಲ ಬಾರಿಗೆ ಸರ್ಕಾರದಿಂದ ಕಲಬುರಗಿ ಶರಣಬಸವ ವಿಶ್ವವಿದ್ಯಾಲಯದಲ್ಲಿ ಫೆಬ್ರವರಿ 17 ಮತ್ತು 18 ರಂದು ಎರಡು ದಿನಗಳ ಕಾಲ ಭವಿಷ್ಯದಲ್ಲಿ ಪತ್ರಕರ್ತರಾಗುವ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗಾಗಿ ಮೀಡಿಯಾ ಫೆಸ್ಟ್-2025 ಕಾರ್ಯಕ್ರಮ ಆಯೋಜಿಸಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಲಬುರಗಿ ಉಪನಿರ್ದೇಶಕ ಜಡಿಯಪ್ಪ ಗೆದ್ಲಗಟ್ಟಿ ತಿಳಿಸಿದರು.
ಮಂಗಳವಾರ ಕಲಬುರಗಿ ನಗರದ ಪತ್ರಿಕಾ ಭವನದಲ್ಲಿ ಜಂಟಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕರ್ನಾಟಕ ಮಾಧ್ಯಮ ಅಕಾಡೆಮಿ, ಶರಣಬಸವ ವಿಶ್ವವಿದ್ಯಾಲಯ ಹಾಗೂ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕಲಬುರಗಿ ಇವರ ಸಹಯೋಗದೊಂದಿಗೆ ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಕಾರ್ಯಾಗಾರ, ನುರಿತ ಪತ್ರಕರ್ತರಿಂದ ಗೋಷ್ಠಿ, ಸ್ಪರ್ಧೆಗಳು ನಡೆಯಲಿವೆ. ಕಲಬುರಗಿ ಮತ್ತು ಬೆಳಗಾವಿ ವಿಭಾಗದ ವಿಶ್ವವಿದ್ಯಾಲಯ, ಪದವಿ ಹಾಗೂ ಸ್ನಾತಕೋತ್ತರ ಪದವಿ ಪತ್ರಿಕೋದ್ಯಮ ವಿಭಾಗದ ಸುಮಾರು 200 ವಿದ್ಯಾರ್ಥಿಗಳು ಮತ್ತು ಕಾಲೇಜಿನ ಪ್ರಾಧ್ಯಾಪಕರು ಇದರಲ್ಲಿ ಭಾಗವಹಿಸಲಿದ್ದಾರೆ ಎಂದರು.
ಪತ್ರಿಕೋದ್ಯಮ ವಿದ್ಯಾರ್ಥಿಗಳ ಪ್ರತಿಭೆ ಪ್ರದರ್ಶನಕ್ಕೆ ವೇದಿಕೆ
ಶರಣಬಸವ ವಿಶ್ವವಿದ್ಯಾಲಯದ ಪತಿಕೋದ್ಯಮ ಮತ್ತು ಸಮೂಹ ಸಂವಹನ ಸ್ನಾತಕೋತ್ತರ ಪದವಿ ವಿಭಾಗದ ಮುಖ್ಯಸ್ಥ ಟಿ.ವಿ.ಶಿವಾನಂದನ್ ಮಾತನಾಡಿ, ಎರಡು ದಿನಗಳ ಕಾಲ ನಡೆಯುವ ಈ ಮಾಧ್ಯಮೋತ್ಸವದಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ವೇದಿಕೆ ಒದಗಿಸಲಾಗುತ್ತಿದೆ. ಭವಿಷ್ಯದ ಸ್ಪರ್ಧಾತ್ಮಕ ಪತ್ರಕರ್ತರಲ್ಲಿ ಅತ್ಯುತ್ತಮರನ್ನು ಹೊರತರಲು ಹತ್ತು ಹಲವು ಸ್ಪರ್ಧೆಗಳನ್ನು ವಿನ್ಯಾಸಗೊಳಿಸಿದ್ದು, ಶರಣಬಸವ ವಿಶ್ವವಿದ್ಯಾಲಯದ ಮುಖ್ಯ ಆವರಣದ ವಿವಿಧ ಸ್ಥಳಗಳಲ್ಲಿ ಈ ಸ್ಪರ್ಧೆ ನಡೆಯಲಿವೆ. ಕಾರ್ಯಕ್ರಮ್ಕಕೆ ಆಗಮಿಸುವ ವಿದ್ಯಾರ್ಥಿಗಳಿಗೆ ವಿ.ವಿ.ಯಲ್ಲಿ ವಸತಿ, ಊಟದ ವ್ಯವಸ್ಥೆ ಮಾಡಿದ್ದು, ಸ್ಪರ್ಧೇಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕ ಇಲ್ಲ. ಪ್ರವೇಶ ಸಂಪೂರ್ಣ ಉಚಿತ ಇರಲಿದೆ. ಇನ್ನು ಕರ್ನಾಟಕ ಮಾಧ್ಯಮ ಅಕಾಡೆಮಿಯು ವಿದ್ಯಾರ್ಥಿಗಳ ನೋಂದಣಿ ಕಾರ್ಯ ನಿರ್ವಹಿಸುತ್ತಿದೆ ಎಂದರು.
ವೈಯಕ್ತಿಕ ಸ್ಪರ್ಧೆಗಳು ಮತ್ತು ಗುಂಪು ಸ್ಪರ್ಧೆಗಳು ಎಂದು ಎರಡು ವಿಭಾಗಗಳಾಗಿ ಸ್ಪರ್ಧೇಗಳನ್ನು ವಿಂಗಡಿಸಲಾಗಿದೆ. ವೈಯಕ್ತಿಕ ಸ್ಪರ್ಧೆಗಳಲ್ಲಿ ನೇರ ಪತ್ರಿಕಾಗೋಷ್ಠಿ ವರದಿ ಮಾಡುವಿಕೆ, ಪಿಟಿಸಿ ಮತ್ತು ಟಿವಿ ವರದಿ ಮಾಡುವಿಕೆ, ಸ್ಪಾಟ್ ಛಾಯಾಗ್ರಹಣ, ರೇಡಿಯೋ ಜಾಕಿ, ನುಡಿಚಿತ್ರ, ಜಾಹೀರಾತು ಬರವಣಿಗೆ, ಸಾಮಾಜಿಕ ಮಾಧ್ಯಮದ ವರದಿ ಮಾಡುವಿಕೆ ಮತ್ತು ಮುಖ್ಯಾಂಶಗಳನ್ನು ಬರೆಯುವ ಕಲೆ ಸೇರಿವೆ. ಗುಂಪು ಸ್ಪರ್ಧೆಗಳಲ್ಲಿ ಪ್ರಚಲಿತ ವಿದ್ಯಮಾನಗಳ ಕುರಿತು ರಸಪ್ರಶ್ನೆ, “ನಮ್ಮೂರ ಭಾಷೆ–ವರವಾ?
ಶಾಪವಾ?”
ಚರ್ಚಾ ಸ್ಪರ್ಧೆ ಸೇರಿದೆ ಎಂದರು.
ಕಲ್ಯಾಣ ಕರ್ನಾಟಕ ಮಾಧ್ಯಮೋತ್ಸವದ ಮತ್ತೊಂದು ವೈಶಿಷ್ಟ್ಯವೆಂದರೆ ಉದಯೋನ್ಮುಖ ಪತ್ರಕರ್ತರ ಕೌಶಲ್ಯಗಳನ್ನು ಉತ್ತಮಗೊಳಿಸುವ ಎರಡು ಕಾರ್ಯಾಗಾರಗಳು ಹಮ್ಮಿಕೊಳ್ಳಲಾಗಿದೆ. ಮೊದಲ ಕಾರ್ಯಾಗಾರದಲ್ಲಿ ಹಿರಿಯ ಪತ್ರಕರ್ತ ಹಾಗೂ ನಟ, ನಿರ್ದೇಶಕ ಮತ್ತು ಆಲ್ಮಾ ಮೀಡಿಯಾದ ಸಂಸ್ಥಾಪಕರಾದ ಗೌರೀಶ್ ಅಕ್ಕಿ, ಮಾಧ್ಯಮದ ಸ್ಪರ್ಧಾತ್ಮಕ ಜಗತ್ತನ್ನು ಪ್ರವೇಶಿಸುವ ಹಾಗೂ ಸವಾಲುಗಳನ್ನು ಎದುರಿಸಲು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದ ವಿದ್ಯಾರ್ಥಿಗಳನ್ನು ಪರಿಣಾಮಕಾರಿಯಾಗಿ ಸಿದ್ಧಪಡಿಸುವ ಕುರಿತು ಮಾತನಾಡಲಿದ್ದಾರೆ. ಎರಡನೇ ಕಾರ್ಯಾಗಾರದಲ್ಲಿ ನಕಲಿ ಸುದ್ದಿಗಳನ್ನು ಹೇಗೆ ಗುರುತಿಸುವುದು ಎಂಬುದರ ಕುರಿತು ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿಯ ಹಿರಿಯ ಪತ್ರಕರ್ತೆ ಹಾಗೂ ಪ್ರಾಧ್ಯಾಪಕಿ ಪ್ರೊ. ಕಾಂಚನ ಕೌರ್ ಮಾತನಾಡಲಿದ್ದಾರೆ ಎಂದು ಕಾರ್ಯಕ್ರಮದ ರೂಪುರೇಷೆ ಕುರಿತು ವಿವರಿಸಿದ ಟಿ.ವಿ.ಶಿವಾನಂದನ್ ಅವರು, ಎರಡು ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹ ನಡೆಯಲಿವೆ ಎಂದರು.
ಫೆಬ್ರವರಿ 17 ರಂದು ಕೆ.ಕೆ.ಆರ್.ಡಿ.ಬಿ ಅಧ್ಯಕ್ಷ ಡಾ. ಅಜಯ್ ಸಿಂಗ್ ಅವರು ಮೀಡಿಯಾ ಫೆಸ್ಟ್ ಉದ್ಘಾಟಿಸಲಿದ್ದಾರೆ. ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್ ಡಾ. ದಾಕ್ಷಾಯಿಣಿ ಅವ್ವಾಜಿ ಮತ್ತು ಸಂಸ್ಥಾನದ 9ನೇ ಪೀಠಾಧಿಪತಿ ಪೂಜ್ಯ ಚಿರಂಜೀವಿ ದೊಡ್ಡಪ್ಪ ಅಪ್ಪಾಜಿಯವರ ದಿವ್ಯ ಸಾನಿಧ್ಯದಲ್ಲಿ ನಡೆಯುವ ಈ ಸಮಾರಂಭದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷೆ ಆಯೇಷಾ ಖಾನಮ್, ಕೊಪ್ಪಳ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ. ಬಿ. ಕೆ. ರವಿ, ಶರಣಬಸವ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ. ಅನಿಲ್ಕುಮಾರ್ ಬಿಡವೆ, ಗುಲಬರ್ಗಾ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ. ಶ್ರೀರಾಮುಲು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಭವಾನಿ ಸಿಂಗ್, ಕಲಬುರಗಿ ಘಟಕದ ಅಧ್ಯಕ್ಷ ಬಾಬುರಾವ್ ಯಡ್ರಾಮಿ ಮತ್ತು ಇನ್ನಿತರ ಗಣ್ಯರು ಈ ಮಾಧ್ಯಮೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.
ಫೆಬ್ರವರಿ 18 ರಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಅವರು ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಕಲಬುರಗಿಯ ಉತ್ತರ ಮತಕ್ಷೇತ್ರದ ಶಾಸಕಿ ಖನೀಜ್ ಫಾತಿಮಾ, ಕಲಬುರಗಿಯ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಮತ್ತು ಇತರ ಚುನಾಯಿತ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜರ್ ಆಲಂ ಖಾನ್ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಿದ್ದಾರೆ ಎಂದು ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಭವಾನಿ ಸಿಂಗ್, ಕಲಬುರಗಿ ಘಟಕದ ಜಿಲ್ಲಾಧ್ಯಕ್ಷ ಬಾಬುರಾವ್ ಯಡ್ರಾಮಿ ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ ನಡೆಸಿದರು.
ನಗರದ ಬಾರ್ ಲೈನ್ ದರ್ಗಕ್ಕೆ ತೆರಳಿ ಚಾದರ ಅರ್ಪಿಸಿದ ಸಮರ್ಥ ಶಾಮನೂರು ಅವರಿಗೆ ಮುಸ್ಲಿಂ ಸಮಾಜದ ಬಾಂಧವರು ಆತ್ಮೀಯವಾಗಿ ಸನ್ಮಾನಿಸಿದರು. ಬಳಿಕ ಅಲ್ಲಿಂದ ಪ್ರಚಾರವನ್ನು ಆರಂಭಿಸಿದ ಅವರು ಎಂ.ಬಿ ಕೇರಿ, ಮಟನ್ ಮಾರ್ಕೇಟ್, ಗಡಿಯಾರ ಕಂಬ, ಸ್ವಾಗೇರ್ ಪೇಟೆ, ಹೊಂಡದ ರಸ್ತೆ, ಕಾಯಿಪೇಟೆಯ ಮನೆ ಮನೆಗೆ ತೆರಳಿ ಮತಯಾಚಿಸಿದರು.
ಕಾಂಗ್ರೆಸ್ ಪಕ್ಷದ ಮುಖಂಡರಾದ ನರಸಿಂಹಪ್ಪ, ರವಿಕುಮಾರ್, ಕಾಶಿನಾಥ್ ಅವರ ಮನೆಗೆ ಅಭ್ಯರ್ಥಿ ಸಮರ್ಥ ಶಾಮನುರು ಅವರು ಭೇಟಿ ನೀಡಿದಾಕ್ಷಣ ಕುಟುಂಬಸ್ಥರು ದಿವಂಗತರಾದ ಡಾ.ಶಾಮನೂರು ಶಿವಶಂಕರಪ್ಪ ಅವರನ್ನು ನೆನೆದು ಭಾವುಕರಾದರು. ಶಾಮನೂರು ಸಮರ್ಥ ಅವರಿಗೆ ದಕ್ಷಿಣ ಕ್ಷೇತ್ರದಲ್ಲಿ ಪ್ರಚಂಡ ಬಹುಮತವನ್ನು ನೀಡಿ ಗೆಲ್ಲಿಸುತ್ತೇವೆ ಎಂದು ಮತದಾರರು ಅಭಿಪ್ರಾಯ ವ್ಯಕ್ತಪಡಿಸಿದರು.
ಸ್ಥಳೀಯ ಮುಖಂಡರಾದ ಚಂದ್ರ ಶೇಖರ್, ಸೋಗಿ ಶಾಂತಕುಮಾರ್, ಪ್ರವೀಣ್ ರಾವ್, ಬಕ್ಕೇಶ್, ಪರಮೇಶ್, ಜಯರಾಜ್, ಹನುಮಂತ್, ರಾಘವೇಂದ್ರ, ಭೀಮಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ
ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು.
ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು ಸರ್ಕಾರದ ಕೊಂಡಿಯಾಗಿ ಸೇವೆ ಮಾಡುತ್ತಿರುವ ಪತ್ರಿಕೆಗಳು ಮುಚ್ಚುತ್ತವೆ. ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ಮಾರಕವಾಗುವ ನಿಯಮಗಳನ್ನು ಅಳವಡಿಸದೇ ಪತ್ರಿಕೆಗಳ ಏಳಿಗೆಗೆ ಪೂರಕವಾದ ಅಂಶಗಳನ್ನು ಸೇರಿಸಿ ಕರ್ನಾಟಕ ಜಾಹೀರಾತು ನೀತಿಯನ್ನು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.
ಸಂಘಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಹೀರಾತು ನೀತಿ ಪರಿಶೀಲಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಆರ್ ಕುಣೆಬೆಳಕೆರೆ, ಖಜಾಂಜಿ ಶಿವಮೂರ್ತಿ ಟಿ.ಜಿ , ರಾಜ್ಯ ಸಂಘದ ನಾಮನಿರ್ದೇಶನ ಸದಸ್ಯ ಕೆ.ಜೈಮುನಿ ಮತ್ತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕರಾದ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಖಜಾಂಚಿ ಜೆ.ಎಸ್.ವೀರೇಶ್ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ ಬಡದಾಳ್ , ಹಿರಿಯ ಪತ್ರಕರ್ತರಾದ ಕೆ.ಏಕಾಂತಮ್ಮ, ಬಿ.ಎನ್.ಮಲ್ಲೇಶ್, ಮಲ್ಲಿಕಾರ್ಜುನ ಕಬ್ಬೂರು, ಆರ್.ಎಸ್.ತಿಪ್ಪೇಸ್ವಾಮಿ, ಕೊಟ್ರೇಶ್ ಅಣಬೂರುಮಠ, ನಿಂಗಪ್ಪ, ಗೋವಿಂದ ರಾಜು, ಫಕೃದ್ದೀನ್, ಆರ್.ರವಿ,ಬಿ.ವಾಸುದೇವ, ರಾಘವೇಂದ್ರ ರಾವ್, ವೇದಮೂರ್ತಿ,ನಿಂಗಪ್ಪ, ಪರಶುರಾಮ, ನಂದಕುಮಾರ್ ಮುಂತಾದವರು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


