Connect with us

ದಿನದ ಸುದ್ದಿ

ಫೆಬ್ರವರಿ 17 ಮತ್ತು 18ಕ್ಕೆ ಕಲಬುರಗಿಯಲ್ಲಿ ಮೀಡಿಯಾ ಫೆಸ್ಟ್-2025

Published

on

ಸುದ್ದಿದಿನ,ಕಲಬುರಗಿ:ಕಲ್ಯಾಣ ಕರ್ನಾಟಕದ ಕೇಂದ್ರಸ್ಥಾನ ಕಲಬುರಗಿಯಲ್ಲಿ ಇದೇ ಮೊದಲ ಬಾರಿಗೆ ಸರ್ಕಾರದಿಂದ ಕಲಬುರಗಿ ಶರಣಬಸವ ವಿಶ್ವವಿದ್ಯಾಲಯದಲ್ಲಿ ಫೆಬ್ರವರಿ 17 ಮತ್ತು 18 ರಂದು ಎರಡು ದಿನಗಳ ಕಾಲ ಭವಿಷ್ಯದಲ್ಲಿ ಪತ್ರಕರ್ತರಾಗುವ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗಾಗಿ ಮೀಡಿಯಾ ಫೆಸ್ಟ್-2025 ಕಾರ್ಯಕ್ರಮ ಆಯೋಜಿಸಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಲಬುರಗಿ ಉಪನಿರ್ದೇಶಕ ಜಡಿಯಪ್ಪ ಗೆದ್ಲಗಟ್ಟಿ ತಿಳಿಸಿದರು.

ಮಂಗಳವಾರ ಕಲಬುರಗಿ ನಗರದ ಪತ್ರಿಕಾ ಭವನದಲ್ಲಿ ಜಂಟಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕರ್ನಾಟಕ ಮಾಧ್ಯಮ ಅಕಾಡೆಮಿ, ಶರಣಬಸವ ವಿಶ್ವವಿದ್ಯಾಲಯ ಹಾಗೂ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕಲಬುರಗಿ ಇವರ ಸಹಯೋಗದೊಂದಿಗೆ ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಕಾರ್ಯಾಗಾರ, ನುರಿತ ಪತ್ರಕರ್ತರಿಂದ ಗೋಷ್ಠಿ, ಸ್ಪರ್ಧೆಗಳು ನಡೆಯಲಿವೆ. ಕಲಬುರಗಿ ಮತ್ತು ಬೆಳಗಾವಿ ವಿಭಾಗದ ವಿಶ್ವವಿದ್ಯಾಲಯ, ಪದವಿ ಹಾಗೂ ಸ್ನಾತಕೋತ್ತರ ಪದವಿ ಪತ್ರಿಕೋದ್ಯಮ ವಿಭಾಗದ ಸುಮಾರು 200 ವಿದ್ಯಾರ್ಥಿಗಳು ಮತ್ತು ಕಾಲೇಜಿನ ಪ್ರಾಧ್ಯಾಪಕರು ಇದರಲ್ಲಿ ಭಾಗವಹಿಸಲಿದ್ದಾರೆ ಎಂದರು.

ಪತ್ರಿಕೋದ್ಯಮ ವಿದ್ಯಾರ್ಥಿಗಳ ಪ್ರತಿಭೆ ಪ್ರದರ್ಶನಕ್ಕೆ ವೇದಿಕೆ

ಶರಣಬಸವ ವಿಶ್ವವಿದ್ಯಾಲಯದ ಪತಿಕೋದ್ಯಮ ಮತ್ತು ಸಮೂಹ ಸಂವಹನ ಸ್ನಾತಕೋತ್ತರ ಪದವಿ ವಿಭಾಗದ ಮುಖ್ಯಸ್ಥ ಟಿ.ವಿ.ಶಿವಾನಂದನ್ ಮಾತನಾಡಿ, ಎರಡು ದಿನಗಳ ಕಾಲ ನಡೆಯುವ ಈ ಮಾಧ್ಯಮೋತ್ಸವದಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ವೇದಿಕೆ ಒದಗಿಸಲಾಗುತ್ತಿದೆ. ಭವಿಷ್ಯದ ಸ್ಪರ್ಧಾತ್ಮಕ ಪತ್ರಕರ್ತರಲ್ಲಿ ಅತ್ಯುತ್ತಮರನ್ನು ಹೊರತರಲು ಹತ್ತು ಹಲವು ಸ್ಪರ್ಧೆಗಳನ್ನು ವಿನ್ಯಾಸಗೊಳಿಸಿದ್ದು, ಶರಣಬಸವ ವಿಶ್ವವಿದ್ಯಾಲಯದ ಮುಖ್ಯ ಆವರಣದ ವಿವಿಧ ಸ್ಥಳಗಳಲ್ಲಿ ಈ ಸ್ಪರ್ಧೆ ನಡೆಯಲಿವೆ. ಕಾರ್ಯಕ್ರಮ್ಕಕೆ ಆಗಮಿಸುವ ವಿದ್ಯಾರ್ಥಿಗಳಿಗೆ ವಿ.ವಿ.ಯಲ್ಲಿ ವಸತಿ, ಊಟದ ವ್ಯವಸ್ಥೆ ಮಾಡಿದ್ದು, ಸ್ಪರ್ಧೇಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕ ಇಲ್ಲ. ಪ್ರವೇಶ ಸಂಪೂರ್ಣ ಉಚಿತ ಇರಲಿದೆ. ಇನ್ನು ಕರ್ನಾಟಕ ಮಾಧ್ಯಮ ಅಕಾಡೆಮಿಯು ವಿದ್ಯಾರ್ಥಿಗಳ ನೋಂದಣಿ ಕಾರ್ಯ ನಿರ್ವಹಿಸುತ್ತಿದೆ ಎಂದರು.

ವೈಯಕ್ತಿಕ ಸ್ಪರ್ಧೆಗಳು ಮತ್ತು ಗುಂಪು ಸ್ಪರ್ಧೆಗಳು ಎಂದು ಎರಡು ವಿಭಾಗಗಳಾಗಿ ಸ್ಪರ್ಧೇಗಳನ್ನು ವಿಂಗಡಿಸಲಾಗಿದೆ. ವೈಯಕ್ತಿಕ ಸ್ಪರ್ಧೆಗಳಲ್ಲಿ ನೇರ ಪತ್ರಿಕಾಗೋಷ್ಠಿ ವರದಿ ಮಾಡುವಿಕೆ, ಪಿಟಿಸಿ ಮತ್ತು ಟಿವಿ ವರದಿ ಮಾಡುವಿಕೆ, ಸ್ಪಾಟ್ ಛಾಯಾಗ್ರಹಣ, ರೇಡಿಯೋ ಜಾಕಿ, ನುಡಿಚಿತ್ರ, ಜಾಹೀರಾತು ಬರವಣಿಗೆ, ಸಾಮಾಜಿಕ ಮಾಧ್ಯಮದ ವರದಿ ಮಾಡುವಿಕೆ ಮತ್ತು ಮುಖ್ಯಾಂಶಗಳನ್ನು ಬರೆಯುವ ಕಲೆ ಸೇರಿವೆ. ಗುಂಪು ಸ್ಪರ್ಧೆಗಳಲ್ಲಿ ಪ್ರಚಲಿತ ವಿದ್ಯಮಾನಗಳ ಕುರಿತು ರಸಪ್ರಶ್ನೆ, “ನಮ್ಮೂರ ಭಾಷೆ–ವರವಾ?
ಶಾಪವಾ?”
ಚರ್ಚಾ ಸ್ಪರ್ಧೆ ಸೇರಿದೆ ಎಂದರು.

ಕಲ್ಯಾಣ ಕರ್ನಾಟಕ ಮಾಧ್ಯಮೋತ್ಸವದ ಮತ್ತೊಂದು ವೈಶಿಷ್ಟ್ಯವೆಂದರೆ ಉದಯೋನ್ಮುಖ ಪತ್ರಕರ್ತರ ಕೌಶಲ್ಯಗಳನ್ನು ಉತ್ತಮಗೊಳಿಸುವ ಎರಡು ಕಾರ್ಯಾಗಾರಗಳು ಹಮ್ಮಿಕೊಳ್ಳಲಾಗಿದೆ. ಮೊದಲ ಕಾರ್ಯಾಗಾರದಲ್ಲಿ ಹಿರಿಯ ಪತ್ರಕರ್ತ ಹಾಗೂ ನಟ, ನಿರ್ದೇಶಕ ಮತ್ತು ಆಲ್ಮಾ ಮೀಡಿಯಾದ ಸಂಸ್ಥಾಪಕರಾದ ಗೌರೀಶ್ ಅಕ್ಕಿ, ಮಾಧ್ಯಮದ ಸ್ಪರ್ಧಾತ್ಮಕ ಜಗತ್ತನ್ನು ಪ್ರವೇಶಿಸುವ ಹಾಗೂ ಸವಾಲುಗಳನ್ನು ಎದುರಿಸಲು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದ ವಿದ್ಯಾರ್ಥಿಗಳನ್ನು ಪರಿಣಾಮಕಾರಿಯಾಗಿ ಸಿದ್ಧಪಡಿಸುವ ಕುರಿತು ಮಾತನಾಡಲಿದ್ದಾರೆ. ಎರಡನೇ ಕಾರ್ಯಾಗಾರದಲ್ಲಿ ನಕಲಿ ಸುದ್ದಿಗಳನ್ನು ಹೇಗೆ ಗುರುತಿಸುವುದು ಎಂಬುದರ ಕುರಿತು ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿಯ ಹಿರಿಯ ಪತ್ರಕರ್ತೆ ಹಾಗೂ ಪ್ರಾಧ್ಯಾಪಕಿ ಪ್ರೊ. ಕಾಂಚನ ಕೌರ್ ಮಾತನಾಡಲಿದ್ದಾರೆ ಎಂದು ಕಾರ್ಯಕ್ರಮದ ರೂಪುರೇಷೆ ಕುರಿತು ವಿವರಿಸಿದ ಟಿ.ವಿ.ಶಿವಾನಂದನ್ ಅವರು, ಎರಡು ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹ ನಡೆಯಲಿವೆ ಎಂದರು.

ಫೆಬ್ರವರಿ 17 ರಂದು ಕೆ.ಕೆ.ಆರ್.ಡಿ.ಬಿ ಅಧ್ಯಕ್ಷ ಡಾ. ಅಜಯ್ ಸಿಂಗ್ ಅವರು ಮೀಡಿಯಾ ಫೆಸ್ಟ್ ಉದ್ಘಾಟಿಸಲಿದ್ದಾರೆ. ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್ ಡಾ. ದಾಕ್ಷಾಯಿಣಿ ಅವ್ವಾಜಿ ಮತ್ತು ಸಂಸ್ಥಾನದ 9ನೇ ಪೀಠಾಧಿಪತಿ ಪೂಜ್ಯ ಚಿರಂಜೀವಿ ದೊಡ್ಡಪ್ಪ ಅಪ್ಪಾಜಿಯವರ ದಿವ್ಯ ಸಾನಿಧ್ಯದಲ್ಲಿ ನಡೆಯುವ ಈ ಸಮಾರಂಭದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷೆ ಆಯೇಷಾ ಖಾನಮ್, ಕೊಪ್ಪಳ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ. ಬಿ. ಕೆ. ರವಿ, ಶರಣಬಸವ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ. ಅನಿಲ್‌ಕುಮಾರ್ ಬಿಡವೆ, ಗುಲಬರ್ಗಾ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ. ಶ್ರೀರಾಮುಲು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಭವಾನಿ ಸಿಂಗ್, ಕಲಬುರಗಿ ಘಟಕದ ಅಧ್ಯಕ್ಷ ಬಾಬುರಾವ್ ಯಡ್ರಾಮಿ ಮತ್ತು ಇನ್ನಿತರ ಗಣ್ಯರು ಈ ಮಾಧ್ಯಮೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.

ಫೆಬ್ರವರಿ 18 ರಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಅವರು ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಕಲಬುರಗಿಯ ಉತ್ತರ ಮತಕ್ಷೇತ್ರದ ಶಾಸಕಿ ಖನೀಜ್ ಫಾತಿಮಾ, ಕಲಬುರಗಿಯ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಮತ್ತು ಇತರ ಚುನಾಯಿತ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜರ್ ಆಲಂ ಖಾನ್ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಿದ್ದಾರೆ ಎಂದು ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಭವಾನಿ ಸಿಂಗ್, ಕಲಬುರಗಿ ಘಟಕದ ಜಿಲ್ಲಾಧ್ಯಕ್ಷ ಬಾಬುರಾವ್ ಯಡ್ರಾಮಿ ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ:ಪ್ರಾಚಾರ್ಯರು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರ ಸಹಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಹುಬ್ಬಳ್ಳಿಯ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕರಾದ ರಮೇಶ್ ದೇಸಾಯಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಸರ್ಕಾರದಿಂದ ವಿತರಣೆಯಾದ ಟೂಲ್‌ಕಿಟ್‌ಗಳನ್ನು ನಿಯಮಾನುಸಾರ ವಿತರಣೆ ಮಾಡದೆ ವಂಚಿಸಿರುವ ಅಧಿಕೃತ ಮಾಹಿತಿಯ ಆಧಾರದ ಮೇಲೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ, ಮಾಹಿತಿ ಕೋರಲಾಗಿತ್ತು.

ಪ್ರಾಚಾರ್ಯರು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿ ಫಾರ್ ಸಹಿಯೊಂದಿಗೆ ಹಿಂಬರಹ ನೀಡಲಾಗಿರುತ್ತದೆ. ಮಾಹಿತಿ ಅಧಿಕಾರಿ, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿರುವ ಫಾರ್ ಸಹಿಯೇ ಪ್ರಾಚಾರ್ಯರ ಹೆಸರಿನ ಪತ್ರದಲ್ಲಿ ನಮೂದಾಗಿರುತ್ತದೆ. ಸದರಿ ಸಂಸ್ಥೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಪ್ರಾಚಾರ್ಯರೇ ಆಗಿರುತ್ತಾರೆ.

ಹೀಗಿರುವಾಗ ಪಾಚಾರ್ಯರ ಮುದ್ರೆ ಇರುವಲ್ಲಿ ಫಾರ್ ಎಂಬುದಾಗಿ ನಮೂದಿಸಿ ಸಹಿ ಮಾಡಿ, ಮಾಹಿತಿ ಅಧಿಕಾರಿ ಎಂಬ ಮುದ್ರೆಗೆ ಫಾರ್ ಬಳಸದೆ ಸಹಿ ಮಾಡಿರುವುದು ಹಲವು ಅನುಮಾನಕ್ಕೆ ಕಾರಣವಾಗಿ ಈ ಬಗ್ಗೆ ತನಿಖೆ ನಡೆಸುವಂತೆ ಜಂಟಿ ನಿರ್ದೇಶಕರಿಗೆ ದೂರು ನೀಡಲಾಗಿತ್ತು.

ಆದರೆ ಜಂಟಿ ನಿರ್ದೇಶಕರು, ಕೌಶಲ್ಯ ಅಭಿವೃದ್ದಿ ಮತ್ತು ಉದ್ಯೋಗ ಇಲಾಖೆ, ಹುಬ್ಬಳ್ಳಿ ಇವರಿಗೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಂಡ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿತ್ರದುರ್ಗ | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಮರ್‌ನಾಥ್ ಜೈನ್ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಿತ್ರದುರ್ಗ ಜಿಲ್ಲೆಯ 6 ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಇಲಾಖಾ ತನಿಖೆ ನಡೆಸದೆ ಕಾಲ ವಿಳಂಬ ಮಾಡುತ್ತಿರುವ ಚಿತ್ರದುರ್ಗ ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಅಮರ್‌ನಾಥ್ ಜೈನ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ 06 ಅರ್ಜಿ ಸಲ್ಲಿಸಿ, ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಉಪವಿಭಾಗಗಳಿಗೆ ಬಿಡುಗಡೆಯಾದ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿದ್ದರು.

ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ಸದರಿ ಪ್ರಕರಣವನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿದ್ದರು.

ನಿಯಮಾನುಸಾರ ಇಲಾಖೆ ತನಿಖೆ ನಡೆಸದೆ ಕಾಲ ವಿಳಂಬ ಮಾಡುವ ಉದ್ದೇಶದಿಂದ 6 ತಾಲ್ಲೂಕು ಉಪ ವಿಭಾಗಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯುವಂತೆ ಆದೇಶ ಹೊರಡಿದ್ದು, ಇದರಂತೆ ವಕೀಲ ಡಾ.ಕೆ.ಎ.ಓಬಳಪ್ಪ ಇವರು ಎಲ್ಲಾ ಉಪವಿಭಾಗಗಳಿಗೆ ಭೇಟಿ ನೀಡಿ ದಾಖಲೆ ಪರಿಶೀಲನೆ ಮಾಡಿದಾಗ ದಾಖಲೆಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ.

ಈ ಬಗ್ಗೆ ಕಾರ್ಯಪಾಲಕ ಅಭಿಯಂತರರಿಗೆ ದೂರು ನೀಡಿದರೂ ನಿರ್ಲಕ್ಷö್ಯ ತೋರಿದ ಕಾರಣ, ಕರ್ತವ್ಯ ಲೋಪದ ಅಡಿಯಲ್ಲಿ ಕಾರ್ಯಪಾಲಕ ಅಭಿಯಂತರರಾದ ಅಮರ್‌ನಾಥ್ ಜೈನ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending