ರಾಜಕೀಯ
ಮೀಡಿಯಾಗಳು ಮೋದಿ ಪರವಾಗಿಲ್ಲ; ಪರವಾಗಿ ಇರಲೇಬೇಕಿದೆ’: ಎಬಿಪಿ ನ್ಯೂಸ್ ವೃತ್ತಾಂತದ ಸುತ್ತ…
ಸುದ್ದಿದಿನ ಡೆಸ್ಕ್ | ಎಬಿಪಿ ನ್ಯೂಸ್ ನೆಟ್ವರ್ಕ್ನ ಮ್ಯಾನೇಜಿಂಗ್ ಎಡಿಟರ್ ಮಿಲಿಂದ್ ಖಂಡೇಕರ್ ಆಗಸ್ಟ್ 1ರಂದು ರಾಜೀನಾಮೆ ನೀಡಿ ಸಂಸ್ಥೆಯಿಂದ ಹೊರ ನಡೆದಿದ್ದಾರೆ. ಬೆನ್ನಿಗೆ ಹಲವು ಹಿರಿತಲೆಗಳೂ ಚಾನಲ್ ತೊರೆದಿದ್ದಾರೆ.
ಕೆಲವು ತಿಂಗಳ ಕೆಳಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ‘ದೇಶದ ಮಾಧ್ಯಮ ವಲಯದಲ್ಲಿ ಭಯ ಸೃಷ್ಟಿಯಾಗಿದೆ. ಪತ್ರಕರ್ತರು, ಮಾಧ್ಯಮ ಸಂಸ್ಥೆಗಳು ಒತ್ತಡದಲ್ಲಿವೆ’ ಎಂಬರ್ಥದ ಹೇಳಿಕೆ ನೀಡಿದ್ದರು.
ಈ ಆರೋಪಗಳ ನಡುವೆ ಎಬಿಪಿ ನ್ಯೂಸ್ ನೆಟ್ವರ್ಕ್ನ ಮ್ಯಾನೇಜಿಂಗ್ ಎಡಿಟರ್ ಮಿಲಿಂದ್ ಖಂಡೇಕರ್ ಆಗಸ್ಟ್ 1ರಂದು ರಾಜೀನಾಮೆ ನೀಡಿ ಸಂಸ್ಥೆಯಿಂದ ಹೊರ ನಡೆದಿದ್ದಾರೆ. ಬೆನ್ನಿಗೆ ಹಲವು ಹಿರಿತಲೆಗಳೂ ಚಾನಲ್ ತೊರೆದಿದ್ದಾರೆ. ವಾಹಿನಿಯಲ್ಲಿ ಪ್ರೈಮ್ಟೈಮ್ ಕಾರ್ಯಕ್ರಮ ಮಾಸ್ಟರ್ಸ್ಟ್ರೋಕ್ ನಡೆಸಿಕೊಡುತ್ತಿದ್ದ ಹಿರಿಯ ಪತ್ರಕರ್ತ ಪುನ್ಯ ಪ್ರಸೂನ್ ಬಾಜಪೇಯಿ ಗುರುವಾರ ಚಾನಲ್ ತೊರೆದಿದ್ದರೆ, ಅಭಿಸಾರ್ ಶರ್ಮಾ ರಜೆಯ ಮೇಲೆ ಕಚೇರಿಯಿಂದ ಹೊರ ಹೋಗಿದ್ದಾರೆ.
ಸಾಮಾನ್ಯವಾಗಿ ಪತ್ರಕರ್ತರು ಮಾಧ್ಯಮ ಸಂಸ್ಥೆಯೊಂದನ್ನು ತೊರೆದಾಗ ಮಾಧ್ಯಮ ವಲಯದಿಂದಾಚೆ ಚರ್ಚೆಗಳಾಗುವುದು ಅಪರೂಪ. ಆದರೆ ಬಾಜಪೇಯಿ ಮತ್ತು ಖಂಡೇಕರ್ ನಿರ್ಗಮನ ಪತ್ರಕರ್ತರ ವರ್ತುಲ ದಾಟಿ ಸುದ್ದಿಯಾಗಿದೆ.
ಈ ಕುರಿತು ಟ್ಟೀಟ್ ಮಾಡಿರುವ ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲ, ‘ಅಧಿಕಾರದಲ್ಲಿರುವವರ ಬಗೆಗಿನ ಸತ್ಯದ ಧ್ವನಿಯನ್ನು ನಿಗ್ರಹಿಸುವ ಯತ್ನ ಇದು’ ಎಂದು ಕಿಡಿಕಾರಿದ್ದಾರೆ. ಇನ್ನೊಂದು ಕಡೆ ಸಂಸತ್ನಲ್ಲಿ ಮಾತನಾಡಿರುವ ಟಿಎಂಸಿ ಸಂಸದ ಡೆರೇಕ್ ಓಬ್ರಿಯಾನ್, ಪತ್ರಕರ್ತರ ಮೇಲೆ ಒತ್ತಡಗಳಿವೆ ಎಂದು ಹೇಳಿದ್ದಾರೆ.
ಆಗಿದ್ದೇನು?
ಅಷ್ಟಕ್ಕೂ ಈ ಪತ್ರಕರ್ತರ ನಿರ್ಗಮನಕ್ಕೆ ಕಾರಣವಾಗಿದ್ದು ಏನು ಎಂದು ಹುಡುಕುತ್ತಾ ಹೊರಟರೆ ಅಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮ ಮತ್ತು ಅದರ ಸುತ್ತಾ ನಡೆದ ಘಟನಾವಳಿಗಳು ಕಾಣಿಸಿಕೊಳ್ಳುತ್ತವೆ.
ತಮ್ಮ ಅವಧಿ ಮುಗಿಯುತ್ತಾ ಬಂದಿರುವಾಗ ಪ್ರಧಾನಿ ನರೇಂದ್ರ ಮೋದಿ ದೇಶದ ವಿವಿಧ ಸಮುದಾಯಗಳ ಜತೆ ಸಂವಾದ ನಡೆಸುತ್ತಿದ್ದಾರೆ. ಹೀಗೆ ಛತ್ತೀಸ್ಗಢದ ಚಂದ್ರಮನಿ ಕೌಶಿಕ್ ಎಂಬ ಮಹಿಳೆ ಜತೆ ಅವರು ಮಾತುಕತೆ ನಡೆಸುತ್ತಿದ್ದಾಗ, ಆಕೆ ‘ನಾನು ಭತ್ತ ಬೆಳೆಯುವ ಬದಲು ಸೀತಾಪಲ ಬೆಳೆಯಲು ಆರಂಭಿಸಿ ದುಪ್ಪಟ್ಟು ಲಾಭ ಗಳಿಸುತ್ತಿದ್ದೇನೆ’ ಎಂದು ಹೇಳಿದ್ದರು.
ಈ ಬಗ್ಗೆ ‘ಮಾಸ್ಟರ್ಸ್ಟ್ರೋಕ್’ ಕಾರ್ಯಕ್ರಮದಲ್ಲಿ ಪ್ರಸ್ತಾಪಿಸಿದ್ದ ಬಾಜಪೇಯಿ, ಮಹಿಳೆಗೆ ಸುಳ್ಳು ಹೇಳಲು ತರಬೇತಿ ನೀಡಲಾಗಿದೆ ಎಂದು ಆರೋಪಿಸಿದ್ದರು. ದೆಹಲಿಯಿಂದ ಕಂಕೇರ್ ಜಿಲ್ಲೆಗೆ ತೆರಳಿದ್ದ ಅಧಿಕಾರಿಯೊಬ್ಬರು ಈ ರೀತಿ ತಪ್ಪು ಮಾಹಿತಿ ಹೇಳುವಂತೆ ಮಹಿಳೆಗೆ ಸೂಚಿಸಿದ್ದರು ಎಂದು ವರದಿಯಲ್ಲಿ ಹೇಳಲಾಗಿತ್ತು. ಈ ವಿಡಿಯೋ ಕ್ಲಿಪ್ನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಟ್ಟೀಟ್ ಮಾಡುವ ಮೂಲಕ ಇದು ಎಬಿಪಿಯ ಸಾಂಪ್ರದಾಯಿಕ ವೀಕ್ಷಕರನ್ನು ದಾಟಿ ಜನರನ್ನು ತಲುಪಿತ್ತು.
ಮುಗಿಬಿದ್ದ ಬಿಜೆಪಿ
ಇಷ್ಟಾಗಿದ್ದೇ ತಡ ಬಿಜೆಪಿಗರು ಎಬಿಪಿ ನ್ಯೂಸ್ ವಿರುದ್ಧ ಮುಗಿಬಿದ್ದಿದ್ದರು. ಕೇಂದ್ರ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ನರೇಂದ್ರ ಮೋದಿಯನ್ನು ವಿರೋಧಿಸುವ ಅಜೆಂಡಾವನ್ನು ಎಬಿಪಿ ಪತ್ರಕರ್ತರು ಇಟ್ಟುಕೊಂಡಿದ್ದಾರೆ ಎಂದು ಆರೋಪಿಸಿದರು. ವಾಹಿನಿಯ ವರದಿ ಸುಳ್ಳು ಎಂದು ಅವರು ಕಿಡಿಕಾರಿದರು. ರಕ್ಷಣಾ ಸಚಿವೆ, ಮಾಜಿ ಪತ್ರಕರ್ತೆ ನಿರ್ಮಲಾ ಸೀತರಾಮನ್ ಬಾಯಿಯಿಂದಲೂ ಇದೇ ಮಾತು ಹೊರ ಬಂತು.
ಈ ಆರೋಪಕ್ಕೆ ಪ್ರತಿಕ್ರಿಯೆ ನೀಡಲು ನಿರ್ಧರಿಸಿದ ‘ಎಬಿಪಿ ನ್ಯೂಸ್’ ತನ್ನ ವರದಿಗಾರನನ್ನು ಮಹಿಳೆಯಿದ್ದ ಗ್ರಾಮಕ್ಕೆ ಕಳುಹಿಸಿ ವಾಸ್ತವ ವರದಿಯನ್ನು ಬಿತ್ತರಿಸಿತು. ಮತ್ತು ಇದು ನಿಮ್ಮ ‘ಫೇಕ್ ನ್ಯೂಸ್’ ಆರೋಪಕ್ಕೆ ಪ್ರತಿಕ್ರಿಯೆ ಎಂಬುದಾಗಿ ನಿರ್ಮಾಲಾ ಸೀತಾರಾಮನ್ ಮತ್ತು ರಾಜ್ಯವರ್ಧನ್ ಸಿಂಗ್ ರಾಥೋಡ್ರನ್ನು ಟ್ಯಾಗ್ ಮಾಡಿ ಟ್ಟೀಟ್ ಮಾಡಿತು.
ಈ ಬೆಳವಣಿಗೆಯಿಂದ ಉರಿದು ಹೋದ ಬಿಜೆಪಿ ನಾಯಕರು ಚಾನಲ್ಗೆ ಬಹಿಷ್ಕಾರ ಹಾಕಲು ನಿರ್ಧರಿಸಿದ್ದರು ಎಂದು ಚಾನಲ್ ಮೂಲಗಳು ಹೇಳಿದ್ದಾಗಿ ‘ಸ್ಕ್ರಾಲ್’ ವರದಿ ಮಾಡಿದೆ.
ಹೀಗೊಂದು ಹೊಸ ಒತ್ತಡ ತಂತ್ರ
ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ವಾಹಿನಿಗೆ ಹೊಸತೊಂದು ತಲೆನೋವು ಆರಂಭವಾಯಿತು. ‘ಮಾಸ್ಟರ್ಸ್ಟ್ರೋಕ್’ ಕಾರ್ಯಕ್ರಮ ಪ್ರಸಾರವಾಗುತ್ತಿದ್ದ ಪ್ರೈಮ್ಟೈಮ್ ಅವಧಿಯಲ್ಲೇ ವಾಹಿನಿಯ ಸಿಗ್ನಲ್ನಲ್ಲಿ ತೊಂದರೆ ಕಾಣಿಸಿಕೊಳ್ಳಲು ಆರಂಭವಾಯಿತು. ಜುಲೈ 13ರಿಂದ ತಾಂತ್ರಿಕ ಸಮಸ್ಯೆಯೊಂದು ತೆರೆದುಕೊಂಡಿತು.
ಇವೆಲ್ಲಾ ವಾಹಿನಿಯ ಗಮನಕ್ಕೂ ಬಂದಿತ್ತು. ಇದನ್ನು ಉದ್ದೇಶಿಸಿಯೇ ‘ಎಲ್ಲಾ ಅಡ್ಡಿ ಆತಂಕಗಳ ನಡುವೆಯೂ ವಾಹಿನಿ ಸತ್ಯವನ್ನೇ ಹೇಳುತ್ತಾ ಬಂದಿದೆ’ ಎಂದು ಬಾಜಪೇಯಿ ಕಾರವಾಗಿ ಟ್ಟೀಟ್ ಮಾಡಿದ್ದರು. ತಮ್ಮ ಮಾಸ್ಟ್ರರ್ಸ್ಟ್ರೋಕ್ ಪ್ರೋಗ್ರಾಂಗೆ ಆಗುತ್ತಿರುವ ಈ ಸಿಗ್ನಲ್ ಸಮಸ್ಯೆಯಿಂದ ಬೇಸತ್ತಿದ್ದ ಬಾಜಪೇಯಿ, ಹಸಿವಿನಿಂದ ಸಾಯುತ್ತಿರುವರುವವರು, ನಿರುದ್ಯೋಗ, ರೈತರ ಆತ್ಮಹತ್ಯೆ, ಶುದ್ಧಗಾಳಿ, ನೀರು ಇದ್ಯಾವುದರ ಕಡೆಯಗೂ ಗಮನ ನೀಡಲಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು. ಇದಾದ ನಂತರ ಅವರು ತಮ್ಮ ಶೋನ ವಿಡಿಯೋಗಳನ್ನು ಅನಿವಾರ್ಯವಾಗಿ ಟ್ಟೀಟ್ ಮಾಡಲು ಆರಂಭಿಸಿದ್ದರು.
ಅಂದ ಹಾಗೆ ಟಿವಿ ವಾಹಿನಿಗಳ ಪ್ರಸಾರಕ್ಕೆ ಬೇಕಾದ ಈ ಸಿಗ್ನಲ್ಗಳು ಕೇಂದ್ರ ಸರಕಾರದ ಸುಪರ್ದಿಯಲ್ಲಿವೆ. ಮತ್ತು ಹೀಗೆ ಇದ್ದಕ್ಕಿದ್ದ ಹಾಗೆ ವಾಹಿನಿಯೊಂದು ತಾಂತ್ರಿಕ ಸಮಸ್ಯೆಗೆ ಒಳಗಾಗಿದ್ದರ ಹಿಂದೆ ಏನು ನಡೆದಿರಬಹುದು ಎಂದು ಊಹಿಸುವುದು ಕಷ್ಟವೇನಲ್ಲ.
ಈ ಎಲ್ಲಾ ಬೆಳವಣಿಗೆಗಳ ನಂತರ ಬುಧವಾರ ಖಂಡೇಕರ್, ಗುರುವಾರ ಬಾಜೊಪೇಯಿ ರಾಜೀನಾಮೆ ನೀಡಿ ವಾಹಿನಿಯಿಂದ ಹೊರ ನಡೆದಿದ್ದಾರೆ. ಇನ್ನೋರ್ವ ಪತ್ರಕರ್ತ ಅಭಿಸಾರ್ ಶರ್ಮಾ ರಜೆಯ ಮೇಲೆ ತೆರಳಿದ್ದಾರೆ. ಬಹುಶಃ ‘ದೆಹಲಿ ದರ್ಬಾರ್’ನಲ್ಲಿ ಕುಳಿತವರೀಗ ಅಟ್ಟಹಾಸದ ನಗು ಬೀರುತ್ತಿರಬಹುದು. ನೀವು ನಮ್ಮ ಪರವಾಗಿರಿ ಇಲ್ಲವಾದಲ್ಲಿ ವೃತ್ತಿ ತೊರೆಯಲು ಸಿದ್ಧರಾಗಿ ಎಂಬ ಸಂದೇಶವೊಂದು ಮತ್ತೊಮ್ಮೆ ಎದುರಾಗಿದೆ. ಯಾಕೆ ದೇಶದ ಬಹುತೇಕ ಸುದ್ದಿವಾಹಿನಿಗಳು ಕೇಂದ್ರ ಸರಕಾರ ತುತ್ತೂರಿಗಳಾಗಿವೆ ಮತ್ತು ಪತ್ರಕರ್ತರು ಯಾಕೆ ಸ್ವಂತಿಕೆ ಕಳೆದುಕೊಂಡು ಬೆತ್ತಲಾಗಿದ್ದಾರೆ ಎಂಬುದಕ್ಕೆ ಉತ್ತರ ಈ ವೃತ್ತಾಂತದಲ್ಲಿ ಸಿಗುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.
ಹೌದು! 2023ರ ಆಗಸ್ಟ್ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.
http://Visit : www.suddidina.com
ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ:
ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.
ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.
ಕುಟುಂಬದ ಬಜೆಟ್ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:
ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.
ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

ದಿನದ ಸುದ್ದಿ
ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.
http://Visit : www.suddidina.com
ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.
ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:
1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.
2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.
3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.
4. ಖರಗ್ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.
ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.
ಕರ್ನಾಟಕಕ್ಕೆ ಏನು ಲಾಭ?
ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.
ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.
ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ದಿನದ ಸುದ್ದಿ
ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.
ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:
ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.
http://Visit : www.suddidina.com
ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ
ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.
ದೃಢ ಕರ್ನಾಟಕದ ಸಂಕಲ್ಪ
ಶತಕದ ಪಥ – ಪ್ರಗತಿಯ ರಥ100 ದಿನಗಳು.. ಇದು ಕೇವಲ ಆರಂಭವಷ್ಟೇ. ಜನರ ಆಶಯಗಳಿಗೆ ಸ್ಪಂದಿಸಿ, ರಾಜ್ಯದ ಸಮಗ್ರ ಅಭಿವೃದ್ಧಿಗೆ ವೇಗ ನೀಡುವ ಸಂಕಲ್ಪದೊಂದಿಗೆ ಕಳೆದ 100 ದಿನಗಳಲ್ಲಿ ಹಲವು ಮಹತ್ವದ ಹೆಜ್ಜೆಗಳನ್ನು ಇಡಲಾಗಿದೆ. ಮುಂದಿನ ದಿನಗಳಲ್ಲಿ ಅಭಿವೃದ್ಧಿ, ಉದ್ಯೋಗ, ತಂತ್ರಜ್ಞಾನ, ಮೂಲಸೌಕರ್ಯ, ಶಿಕ್ಷಣ, ಕೃಷಿ ಹಾಗೂ… pic.twitter.com/NDViSWw6LV
— DK Shivakumar (@DKShivakumar) September 10, 2026
ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.
100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.
ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.




