ಬಹಿರಂಗ
ಬಣ್ಣ, ರುಚಿ ಮತ್ತು ಶಕ್ತಿ
- ಡಾ.ಎನ್.ಕೆ.ಪದ್ಮನಾಭ,ಸಹಾಯಕ ಪ್ರಾಧ್ಯಾಪಕರು,ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,ಎಸ್.ಡಿ.ಎಂ ಸ್ನಾತಕೊತ್ತರ ಕೇಂದ್ರ,ಉಜಿರೆ
ಈ ಬರಹದ ಶೀರ್ಷಿಕೆಯ ಮೂರೂ ಪದಗಳು ಹಲವರ ನೆನಪಿನ ಪುಟಗಳಲ್ಲಿ ದಾಖಲಾಗಿರಬಹುದು. ಚಹಾಪುಡಿಯನ್ನು ಜನಜನಿತವಾಗಿಸಲು ಟಿ.ವಿ ಮೂಲಕ ತಲುಪಿಕೊಳ್ಳುತ್ತಿದ್ದ ಜಾಹಿರಾತು ಈ ಪದಗಳನ್ನು ನಮ್ಮ ನೆನಪಿನ ಕೋಶದೊಂದಿಗೆ ಬೆರೆಸುವಲ್ಲಿ ಯಶಸ್ವಿಯಾಗಿತ್ತು. ಅದಷ್ಟೇ ಆಗಿದ್ದಿದ್ದರೆ ಈ ಪದಗಳನ್ನು ಪ್ರಸ್ತಾಪಿಸುವುದರ ಮೂಲಕ ಈ ಲೇಖನವನ್ನು ಪ್ರಾರಂಭಿಸುವ ಪ್ರಮೇಯವೇ ಬರುತ್ತಿರಲಿಲ್ಲ.
ವರ್ತಮಾನದ ಸುದ್ದಿಯ ಟ್ರೆಂಡ್ ಮತ್ತು ಆ ಮೂಲಕ ವಿಜೃಂಭಿಸುತ್ತಿರುವ ವಿಕೃತಿಗಳ ಸ್ವರೂಪ ಅರಿತುಕೊಳ್ಳುವುದಕ್ಕೆ ಸಹಾಯಕ ಪದಗಳಾಗಿ ಇವು ನನಗೆ ಮುಖ್ಯವೆನ್ನಿಸುತ್ತಿವೆ. ಸುದ್ದಿ ಮಾಧ್ಯಮದವರು ತಾವು ಮಾಹಿತಿ, ಶಿಕ್ಷಣ ಮತ್ತು ಮನರಂಜನೆಯ ಕಟ್ಟಾ ವಾರಸುದಾರರು ಎಂದು ಬೀಗಿಕೊಂಡು ಅಹಂಕಾರದ ಬೃಹತ್ ರೂಪ ತಾಳಿರುವಾಗ ಈ ಮೂರೂ ಪದಗಳ ಒಳಗೇ ಅಣಕವಾಡುವ ಬಹುದೊಡ್ಡ ಅರ್ಥವಿನ್ಯಾಸ ಅಡಗಿದೆಯೇನೋ ಎಂದೆನ್ನಿಸುತ್ತದೆ.
ಈಗಾಗಲೇ ಅಗಿಹೋದ ದಶಕಗಳಲ್ಲಿನ ಜನಬದುಕಿನಲ್ಲಿ ಆದ್ಯತೆ ಪಡೆದುಕೊಂಡ ಉತ್ಪನ್ನವೊಂದು ಅನಿವಾರ್ಯ ಅವಿಭಾಜ್ಯ ಅಂಶವಾಗಿ ಮಾರ್ಪಟ್ಟಿದ್ದಷ್ಟೇ ಅಲ್ಲದೇ ಪ್ರತಿಷ್ಠೆಯ ಮಾಪಕವಾಗಿಯೂ ಬಳಕೆಯಾದ ಕ್ರಮಾನುಗತ ಇತಿಹಾಸದ ವಿವರಗಳನ್ನೂ ಈ ಮೂರೂ ಪದಗಳು ಅನಾವರಣಗೊಳಿಸುತ್ತವೆ. ಮನೆಗೆ ಬಂದವರಿಗೆ ನೀರು, ನಿಂಬೆಹಣ್ಣಿನ ಪಾನಕ ಅಥವಾ ಮಜ್ಜಿಗೆಯನ್ನು ನೀಡುತ್ತಿದ್ದ ಆತಿಥ್ಯದ ಪರಿಕಲ್ಪನೆಗೆ ಈ ಮೂರು ಪದಗಳೊಂದಿಗೆ ಬಿಂಬಿತವಾದ ಚಹಾಪುಡಿ ಉತ್ಪನ್ನದ ಜಾಹಿರಾತು ಸವಾಲೆಸೆದಿತ್ತು. ಇದರೊಂದಿಗೆ ಇದೇ ತೆರನಾದ ಪಾನೀಯ ಉತ್ಪನ್ನದ ಜಾಹಿರಾತುಗಳು ದೇಶೀ ಆತಿಥ್ಯದಲ್ಲಿ ಪ್ರಾಮುಖ್ಯತೆ ವಹಿಸಿದ್ದ ಪಾನೀಯಗಳನ್ನು ಹಿನ್ನೆಲೆಗೆ ಸರಿಸಿದ್ದವು.
ತದನಂತರದ ತರಹೇವಾರಿ ಜಾಹಿರಾತುಗಳು ನಮ್ಮದಲ್ಲದ ಜೀವನಶೈಲಿಯ ಉತ್ಪನ್ನಗಳ ಬಗೆಗಿನ ವ್ಯಾಮೋಹವನ್ನು ಹಂತಹಂತವಾಗಿ ಹೆಚ್ಚಿಸುತ್ತಲೇ ಬಂದವು. ದೇಶೀಯ ಪಾನೀಯಗಳಿಗೆ ಬಣ್ಣವೂ ಇತ್ತು. ರುಚಿಯೂ ಇತ್ತು. ಶಕ್ತಿಯೂ ಇತ್ತು. ಅವೆಲ್ಲವನ್ನೂ ಅಲ್ಲಗಳೆದು ಹೊಸ ಉತ್ಪನ್ನದ ಕಡೆಗೆ ಆಕರ್ಷಣೆಯಾದದ್ದಕ್ಕೆ ಟೆಲಿವಿಷನ್ ಮಾಧ್ಯಮದ ಪ್ರಭಾವ ಕಾರಣವಾಗಿತ್ತು.
ಇದೇ ಬಗೆಯ ಮಾಧ್ಯಮ ಪ್ರಭಾವವೇ ಈಗ ಜನಜೀವನದ ಕ್ರಮಗಳನ್ನು, ಆಲೋಚನೆಯ ಧಾಟಿಯನ್ನು ನಿಯಂತ್ರಿಸುವಷ್ಟರ ಮಟ್ಟಿಗೆ ಬೆಳೆದುನಿಂತಿದೆ. ಈಗಿನ ನವಮಾಧ್ಯಮಗಳ ಪ್ರಭಾವಳಿಯಂತೂ ಜನರಿಂದ ವಿವೇಚನೆಯನ್ನು ಕಸಿದುಕೊಂಡು ಬಣ್ಣ, ರುಚಿ ಮತ್ತು ಶಕ್ತಿಯ ಕುರಿತ ಅಪವ್ಯಾಖ್ಯಾನಗಳನ್ನು ಮುನ್ನೆಲೆಗೆ ತಂದಿದ್ದಲ್ಲದೇ ಅವೇ ಅಂತಿಮ ಎಂಬ ಭ್ರಮೆಯನ್ನೂ ಬಿತ್ತಿದೆ.
ಬಣ್ಣ, ರುಚಿ ಮತ್ತು ಶಕ್ತಿ ಎಂಬ ಪದಗಳು ಸ್ವತಃ ತಾವೇ ಮುಜುಗರಕ್ಕೊಳಗಾಗುವಂತೆ ಅವುಗಳನ್ನು ಸತ್ವಹೀನ ಸರಕುಗಳಿಗೆ ಅನ್ವಯಿಸುವ ಜಾಯಮಾನ ವ್ಯಾಪಕವಾಗಿದೆ. ಈ ವ್ಯಾಪ್ತಿಯಲ್ಲಿಯೇ ನಾವು ‘ಸುದ್ದಿ’ಯನ್ನಿಟ್ಟು ನೋಡಬೇಕು. ಸುದ್ದಿ ಮಾಧ್ಯಮಗಳನ್ನು ಗ್ರಹಿಸಬೇಕು.
ಈಗ ಸುದ್ದಿಯು ಬರೀ ಸುದ್ದಿಯಾಗಷ್ಟೇ ಉಳಿದಿಲ್ಲ. ಇದಕ್ಕೀಗ ಬಣ್ಣಗಳ ಹಂಗು ಹೆಚ್ಚಾಗಿದೆ. ಸದಭಿರುಚಿಯ ಮನಸ್ಥಿತಿಯನ್ನು ಹಿಂಸೆ, ಸಂಕುಚಿತತೆ ಮತ್ತು ದ್ವೇಷದ ವಿಕೃತಿಗಳ ಕಡೆಗೆ ತಿರುಗಿಸುವ ಅಪಾಯಕಾರಿ ರುಚಿಯ ವ್ಯಾಮೋಹವನ್ನು ಮೂಡಿಸುತ್ತಿದೆ. ಇವೆರಡರೊಂದಿಗೇ ಗುರುತಿಸಿಕೊಳ್ಳುವ ಹಾಗೆಯೇ ನೋಡಿಕೊಂಡು ಅದೇ ವ್ಯಕ್ತಿಯ ನಿಜವಾದ ಶಕ್ತಿ ಎಂಬುದನ್ನು ಭಾವುಕ ವಿಜೃಂಭಣೆಯಲ್ಲಿ ಮಿನುಗಿಸುತ್ತಿದೆ.
ಮಾಹಿತಿ ನೀಡುವ ಮೂಲಕ ಸುಶಿಕ್ಷಿತ ಪರಂಪರೆಗೆ ಕೊಡುಗೆ ನೀಡಿ ರಂಜನೆಗೆ ವಿವೇಚನಾತ್ಮಕ ಆಯಾಮ ನೀಡುತ್ತಿದ್ದ ಸುದ್ದಿಯ ಪಾತ್ರವು ಇದೀಗ ವಿಷದ ಸೋಂಕಿಗೀಡಾಗಿದೆ. ಕೋವಿಡ್-19 ಸೃಷ್ಟಿಸಿದ ಬಿಕ್ಕಟ್ಟಿನ ಅವಧಿಯಲ್ಲಿ ಚರ್ಚಿತವಾದ ಅಮೆರಿಕ ಪೊಲೀಸರ ದ್ವೇಷಕ್ಕೆ ಬಲಿಯಾದ ಜಾರ್ಜ್ ಫ್ಲಾಯ್ಡ್ನ ಕುರಿತ ಸುದ್ದಿ ವ್ಯಕ್ತವಾದಾಗ ಖಂಡನೆಯ ಮಹಾಪೂರವೇ ಸೋಷಿಯಲ್ ಮೀಡಿಯಾದಲ್ಲಿ ಹರಡಿತ್ತು.
ಬಣ್ಣದ ಕಾರಣಕ್ಕಾಗಿಯೇ ನಿರ್ಲಕ್ಷಿತರಾಗುಳಿದು ಆಗಾಗ ಶೋಷಣೆಗೆ ಒಳಗಾಗುತ್ತಲೇ ದುಃಖದುಮ್ಮಾನಗಳನ್ನೆಲ್ಲಾ ಒಡಲೊಳಗಿರಿಸಿಕೊಂಡೇ ಬದುಕು ದೂಡುವ ಜನರ ನಿತ್ಯ ಯಾತನೆಯ ಸುದ್ದಿಬಿಂಬಗಳು ತಾರ್ಕಿಕ ಪರಿಹಾರದ ನಿರೀಕ್ಷೆಯ ಬದ್ಧತೆಯ ಬೆಂಬಲದ ಸ್ಪರ್ಶದೊಂದಿಗೆ ಕಾಣಿಸಿಕೊಳ್ಳುವುದೇ ಇಲ್ಲ. ಬಿಂಬಿತವಾದರೂ ಅನುಕಂಪ ಹುಟ್ಟಿಸುವ ಮತ್ತು ಬದಲಾವಣೆ ಆಗಬೇಕು ಎಂಬ ನಿಲುವುಗಳನ್ನು ಕೃತಕವಾಗಿ ದಾಖಲಿಸಿಬಿಡುವ ಭಾವಗಳನ್ನಷ್ಟೇ ಬಿತ್ತುವುದಕ್ಕಷ್ಟೇ ಸೀಮಿತವಾಗುತ್ತವೆ.
ನನ್ನದೇ ಮನೆಯ ಪಕ್ಕದ ಅಥವಾ ಸಮೀಪದ ಗುಡಿಸಿಲಿನವರನ್ನು ಇನ್ನುಮೇಲೆಯಾದರೂ ಮನುಷ್ಯರನ್ನಾಗಿ ನೋಡಬೇಕು ಎಂಬ ದೃಷ್ಟಿಕೋನವನ್ನು ಬಿತ್ತುವಲ್ಲಿ ಇವು ಸೋಲುತ್ತವೆ. ಅಲ್ಲಿಗೇ ಬಣ್ಣದ ನೆಲೆಯಲ್ಲಿಯೇ ರೂಪುಗೊಳ್ಳುವ ಅಸಮಾನತೆಯ ಜಗತ್ತಿನ ವಿಕೃತ ಸ್ವರೂಪದ ಬೇರು ಇನ್ನಷ್ಟು ಗಟ್ಟಿಯಾಗಿಯೇ ಉಳಿದುಕೊಂಡುಬಿಡುವ ಲಕ್ಷಣಗಳು ದಟ್ಟವಾಗಿಬಿಡುತ್ತವೆ.
ರೈತನ ಆತ್ಮಹತ್ಯೆಗೆ ಸುದ್ದಿ ಮಾಧ್ಯಮಗಳು ಬಳಿಯುವ ಬಣ್ಣ ಕೃತಕವಾದುದು. ಮುದ್ರಿತ ದಿನಪತ್ರಿಕೆಗಳ ಪುಟಗಳ ಬ್ಲಾಕ್ ಆ್ಯಂಡ್ ವೈಟ್ ಬಣ್ಣದಲ್ಲಿ ಕಾಣಿಸಿಕೊಳ್ಳುವ ಸುದ್ದಿ ಓದುಗನಲ್ಲಿ ಆ ಕ್ಷಣಕ್ಕೆ ಅಯ್ಯೋ ಎಂಬ ಭಾವವನ್ನು ಮೂಡಿಸುತ್ತದೆ. ಇತ್ತೀಚೆಗೆ ಕೆಲವು ಪತ್ರಿಕೆಗಳು ಇದೇ ತರಹದ ಸುದ್ದಿಯನ್ನು ವರ್ಣಮುದ್ರಣದೊಂದಿಗೆ ಕಟ್ಟಿಕೊಟ್ಟಾಗ ಅಯ್ಯೋ ಎನ್ನುವ ಆಂತರಿಕ ಭಾವ ಇನ್ನಷ್ಟು ತೀವ್ರಗೊಳಿಸಬಹುದು ಎಂಬ ನಿರೀಕ್ಷೆಯಿರಿಸಿಕೊಂಡಿರುತ್ತವೆ. ‘ದಿ ಹಿಂದೂ’ ಸೇರಿದಂತೆ ಕೆಲವೇ ಕೆಲವು ಪತ್ರಿಕೆಗಳು ರೈತನ ಆತ್ಮಹತ್ಯೆಗೆ ಸಂಬಂಧಿಸಿದಂತೆ ವಾಸ್ತವಿಕವಾದ ಯಥಾವತ್ ವಿವರಗಳನ್ನು ಯಾವುದೇ ಬಗೆಯ ವರ್ಣರಂಜಿತ ನಿರೂಪಣೆ ಇಲ್ಲದೇ ನಮ್ಮ ವಿವೇಚನೆಯ ಅಂತರಿಕ ಶಕ್ತಿಯನ್ನು ವಿಸ್ತರಿಸುವ ರೀತಿಯಲ್ಲಿ ಪ್ರಸ್ತಾಪಿಸುತ್ತವೆ. ಇದೇ ಸುದ್ದಿ ಟೆಲಿವಿಷನ್ ಮಾಧ್ಯಮದ ಮೂಲಕ ಬಂದರೆ ಮಣಭಾರದ ಮೇಕಪ್ ಹೊರೆ ಹೊತ್ತುಕೊಂಡ ಆ್ಯಂಕರ್ಗಳ ಧ್ವನಿಯಲ್ಲಿ ಕೃತಕತೆಯನ್ನು ಪಡೆದುಕೊಂಡುಬಿಡುತ್ತದೆ.
ಹಿಂಸೆ, ಸೆಕ್ಸ್, ರಾಜಕೀಯ ವೈಚಿತ್ರ್ಯಗಳನ್ನು ಬಿಂಬಿಸುವಾಗ ಬಳಸುವ ಧ್ವನಿಶೈಲಿಯನ್ನೇ ರೈತನ ಆತ್ಮಹತ್ಯೆ, ನೈಸರ್ಗಿಕ ವಿಕೋಪ ಸಂದರ್ಭದ ಸಾವು-ನೋವುಗಳನ್ನು ಬಿಂಬಿಸುವಾಗ ಬಳಸುತ್ತಾರೆ. ಅನೇಕ ಅತಿಥಿ ಉಪನ್ಯಾಸಕರು ಕೋವಿಡ್-19 ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ತೊಂದರೆಗೀಡಾಗಿದ್ದಾರೆ. ಕೆಲವರು ಆತ್ಮಹತ್ಯೆಯನ್ನೇ ಪರಿಹಾರವಾಗಿಸಿಕೊಂಡರು.
ಈ ಬಿಂಬಗಳು ರೋಚಕ ರೀತಿಯಲ್ಲಿಯೇ ಇರುತ್ತವೆ. ಪತ್ರಿಕೆಗಳಲ್ಲಿ ಕಂಡುಬರುವ ವೈಚಾರಿಕ ನೋಟಗಳೊಂದಿಗಿನ ವಿಶ್ಲೇಷಣೆಯ ಮಾದರಿ ದೃಶ್ಯಮಾಧ್ಯಮದಲ್ಲಿ ಕಾಣಿಸಿಕೊಳ್ಳುವುದೇ ಇಲ್ಲ. ಕಾಣಿಸುವ ಇರಾದೆಯೂ ಸುದ್ದಿ ಚಾನಲ್ಗಳವರಿಗೆ ಇರುವುದಿಲ್ಲ. ಆತ್ಮಹತ್ಯೆ ಮತ್ತು ಸಾವು ಕೂಡಾ ಅವರಿಗೆ ಉತ್ಪನ್ನಗಳ ಹಾಗೆಯೇ ಮಾರಾಟ ಮಾಡಬಹುದಾದ ಅಂಶಗಳು. ಹಾಗಾಗಿಯೇ ಸುದ್ದಿಬಿಂಬಿಸುವಿಕೆಯ ವೇಳೆ ಕೃತಕತೆಯ ಬಣ್ಣ ಆವರಿಸಿಕೊಂಡುಬಿಡುತ್ತದೆ. ಈ ರೀತಿಯ ವರ್ಣರಂಜಿತ ಸುದ್ದಿಬಿಂಬಗಳು ಪ್ರಭುತ್ವವನ್ನು ಎಚ್ಚರಿಸುವುದು ಒತ್ತಟ್ಟಿಗಿರಲಿ, ಜನರೊಳಗೆ ಪ್ರತಿರೋಧದ ಯಾವ ಆಲೋಚನೆಯನ್ನೂ ನೆಲೆಗೊಳಿಸುವುದಿಲ್ಲ.
ಒಬ್ಬರು ಮತ್ತೊಬ್ಬರನ್ನು ಟೀಕಿಸುತ್ತಾರೆ, ಅಮಾಯಕರೊಬ್ಬರು ಅತ್ಯಾಚಾರಕ್ಕೀಡಾಗುತ್ತಾರೆ, ಯಾರದೋ ಮನೆಯ ಕೋಟಿಗಟ್ಟಲೆ ಹಣ ದೋಚಲ್ಪಡುತ್ತದೆ, ವಿಕೃತನೊಬ್ಬ ಹಲವರನ್ನು ಕೊಲೆಗೈದು ಅಟ್ಟಹಾಸಗೈಯ್ಯುತ್ತಾನೆ, ಯಾರೋ ಮತ್ತಿನ್ಯಾರಿಗೂ ಕಿರುಕುಳವನ್ನು ನೀಡುತ್ತಾರೆ, ಒಬ್ಬರು ಮತ್ತೊಬ್ಬರಿಗೆ ಕೊಲೆಗೈಯ್ಯುವ ಧಮ್ಕಿ ಹಾಕುತ್ತಾರೆ, ಇನ್ನೂ ಅದ್ಭುತ ಭವಿಷ್ಯವಿರುವ ಖ್ಯಾತ ನಟ ಅಕಾಲಿಕ ಮರಣಕ್ಕೀಡಾಗುತ್ತಾನೆ, ಕೊರೊನಾ ವೈರಸ್ ಜಗತ್ತನ್ನು ಸ್ತಬ್ದಗೊಳಿಸಿ ಜನಜೀವನದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತದೆ – ಇವೆಲ್ಲ ಸಂದರ್ಭಗಳಲ್ಲಿ ಅತ್ಯಂತ ಸಂಯಮದ ಧಾಟಿಯಲ್ಲಿ ಸುದ್ದಿ ನಿರೂಪಣೆ ಇರಬೇಕಾಗುತ್ತದೆ. ಆದರೆ, ಸುದ್ದಿ ಮಾಧ್ಯಮಗಳು ಅದರ ಬದಲು ಸುದ್ದಿಗಿರುವ ಸದಭಿರುಚಿಯ ಸ್ವರೂಪಕ್ಕೆ ಕೊಡಲಿಪೆಟ್ಟು ನೀಡುವ ಹಾಗೆ ನಡೆದುಕೊಳ್ಳುತ್ತವೆ.
ಇದನ್ನು ದೃಢಪಡಿಸುವಂತೆಯೇ ಸುದ್ದಿ ಚಾನಲ್ಗಳು ಕೋವಿಡ್-19 ಬಿಕ್ಕಟ್ಟು ತೀವ್ರವಾಗಿದ್ದ ದಿನಗಳಲ್ಲಿ ನಡೆದುಕೊಂಡಿವೆ. ಈಗಲೂ ಅವುಗಳದ್ದು ಅದೇ ಧಾಟಿ. ಹೀಗಾಗಿಯೇ ಸೋಷಿಯಲ್ ಮೀಡಿಯಾ ಮೂಲಕ ಸುದ್ದಿ ಚಾನಲ್ಗಳ ವಿಚಿತ್ರ ನಡಾವಳಿಗಳನ್ನು ವ್ಯಂಗ್ಯಕ್ಕೀಡು ಮಾಡುವ ಮಾತು, ಚರ್ಚೆಗಳು ವ್ಯಕ್ತವಾಗುತ್ತಲೇ ಇವೆ. ವೈರಸ್ವೊಂದು ಜಗತ್ತನ್ನೇ ತಲ್ಲಣಗೊಳಿಸಿದ ಸಂದರ್ಭದಲ್ಲಿ ಮನುಷ್ಯಸಹಜ ವಿಕೃತಿಗಳು ಬೇರೆ ಬೇರೆ ರೂಪದಲ್ಲಿ ಕಾಣಿಸಿಕೊಳ್ಳುತ್ತವೆ.
ನಾವಿರುವ ದೇಶ, ಇಲ್ಲಿಯ ಧರ್ಮ, ಧರ್ಮವನ್ನು ಅಪಭ್ರಂಶಗೊಳಿಸಿದ ಶಕ್ತಿಗಳು, ಅವುಗಳ ನೆರವಿನೊಂದಿಗೇ ಪ್ರಭುತ್ವವನ್ನು ಪ್ರತಿನಿಧಿಸುವ ವರ್ಗ, ಸಮಾನತೆಯ ಸದಾಶಯಗಳನ್ನೇ ನೆಚ್ಚಿಕೊಂಡು ಅಧಿಕಾರಕ್ಕೆ ಬಂದವರ ವಲಯ – ಎಲ್ಲರೂ ಅವರವರ ಮೂಗಿನ ನೇರಕ್ಕೆ ಯೋಚಿಸುತ್ತಾ ವಿತಂಡವಾದಗಳನ್ನು ಮಂಡಿಸುವ ಉತ್ಸಾಹ ವ್ಯಕ್ತಪಡಿಸುತ್ತಾರೆ.
ಅವರ ಈ ವಿಚಿತ್ರ ಉತ್ಸಾಹವನ್ನು ಹೆಚ್ಚಿಸುವ ಹಾಗೆ ಸುದ್ದಿಯ ಕಂಟೆಂಟ್ ಪ್ರಸ್ತುತಪಡಿಸಲ್ಪಟ್ಟರೆ ಪ್ರಯೋಜನವಿಲ್ಲ ಎಂದು ಸುದ್ದಿಮಾಧ್ಯಮಗಳು ಯೋಚಿಸುವ ಆಶಾದಾಯಕ ವಾತಾವರಣ ಈಗಿಲ್ಲ ಎಂಬುದೇ ಆತಂಕಕಾರಿ ಸಂಗತಿ. ಇದರ ಮಧ್ಯೆ ಕೆಲವರಾದರೂ ಅಗತ್ಯವಿದ್ದವರಿಗೆ ಚಾನಲ್ನ ವೇದಿಕೆಯ ಮೂಲಕ ನೆರವಾದರು ಎಂಬ ಸಮಾಧಾನವಿದ್ದರೂ ಅದೇ ತೆರನಾದ ಸಹಾಯಕ ಪಾತ್ರ ಬಹುಸಂಖ್ಯಾತ ಸುದ್ದಿಮಾಧ್ಯಮಗಳಿಂದ ಏಕೆ ಆಗಲಿಲ್ಲ ಎಂಬ ಪ್ರಶ್ನೆಗೆ ಮತ್ತದೇ ಬಣ್ಣ-ರುಚಿಯ ಕುರಿತದ ಅಪವ್ಯಾಖ್ಯಾನದ ವ್ಯಾಮೋಹದ ಕಾರಣವೇ ಉತ್ತರವಾಗುತ್ತದೆ.
ಮಾಹಿತಿ ಮತ್ತು ಶಿಕ್ಷಣ ಇವೆರಡೂ ಜನಬದುಕಿಗೆ ಹೊಸ ಹೊಳಪು ನೀಡುವ, ಹೊಸ ಬಗೆಯ ಅಭಿರುಚಿಯನ್ನು ನೆಲೆಗೊಳಿಸುವಂಥವು. ಬದಲಾವಣೆಗೆ ಕಾರಣವಾಗುವಂಥವು. ಹೀಗೆಯೇ ಅವುಗಳು ಸುದ್ದಿಯಲ್ಲಿ ಪ್ರತಿಫಲನಗೊಳ್ಳಬೇಕಿತ್ತು. ಅದೇ ಆಧಾರದಲ್ಲಿಯೇ ಸುದ್ದಿಯು ಜೀವಪರವಾಗಿ ಯೋಚಿಸುವ ಶಕ್ತಿಯಾಗಿ ಪರಿವರ್ತಿತವಾಗಬೇಕಿತ್ತು.
ಆದರೆ, ಭ್ರಮೆಗಳನ್ನು ಬಿತ್ತುವ ಕೃತಕತೆಯ ಬಣ್ಣ, ದೇಹ-ಮನಸ್ಸನ್ನು ಕಲುಷಿತಗೊಳಿಸಿ ಅಪಾಯಕಾರಿಯಾಗುವ ರುಚಿ ಮತ್ತು ಬಲವೇ ಇಲ್ಲದ ನಿಶ್ಯಕ್ತ ತಾತ್ಪೂರ್ತಿಕ ಶಕ್ತಿಯನ್ನೇ ಮುಖ್ಯ ಎಂದು ಬಿಂಬಿಸುವ ಸರಕು ವಿಕೃತಿಯ ಜಾಡ್ಯ ಸುದ್ದಿಗೂ ಅಂಟಿಕೊಂಡಿರುವುದು ಅಪಾಯಕಾರಿ ಎಂದೆನ್ನಿಸುತ್ತದೆ.
ಓದುಗ, ನೋಡುಗ ಮತ್ತು ಕೇಳುಗ ಸಮೂಹಕ್ಕೆ ಇರುವ ಒಂದೇ ಒಂದು ದಾರಿ ಎಂದರೆ ಬಣ್ಣ, ರುಚಿ ಮತ್ತು ಶಕ್ತಿಯಲ್ಲದ ಶಕ್ತಿಯ ಹುಸಿಬಿಂಬಗಳಿಗೆ ಮಾರುಹೋಗದೇ ಇರುವುದು. ಹಾಗೆ ಮಾರುಹೋಗದೇ ನಮ್ಮನ್ನು ದಾರಿತಪ್ಪಿಸುವ ಹುನ್ನಾರಗಳನ್ನು ಬಹುಬೇಗ ಅರ್ಥೈಸಿಕೊಳ್ಳುವುದು. ಸದ್ಯಕ್ಕೆ ಮತ್ತು ಭವಿಷ್ಯಕ್ಕೆ ಬೇಕಾಗುವ ಬದಲಾವಣೆಯನ್ನು ತಂದುಕೊಳ್ಳುವುದು ಹೇಗೆ ಎಂದು ರಚನಾತ್ಮಕವಾಗಿ ಯೋಚಿಸುವುದು.
ಈ ದಾರಿಯಲ್ಲಿ ಇಡೀ ಜನಸಮೂಹ ನಡೆದರೆ ಸುದ್ದಿ ಮಾಧ್ಯಮಗಳ ಮೇಲೆ ಸಕಾರಾತ್ಮಕ ಒತ್ತಡ ಬೀಳುತ್ತದೆ. ಅಂತರಂಗದ ವಿವೇಚನಾತ್ಮಕ ಹೊಂಬಣ್ಣವನ್ನು ಹೆಚ್ಚಿಸಿಕೊಳ್ಳುವ, ಬೌದ್ಧಿಕ ಸದಭಿರುಚಿಯನ್ನು ನೆಲೆಗೊಳಿಸಿಕೊಳ್ಳುವ ಮತ್ತು ಆ ಕಾರಣಕ್ಕಾಗಿಯೇ ನಮ್ಮ ಕಾಲವನ್ನು ಎಲ್ಲ ತಲ್ಲಣಗಳಿಂದ ವಿಮುಕ್ತಗೊಳಿಸುವ ಸ್ವಯಂಶಕ್ತಿಯನ್ನು ಜಾಗೃತಗೊಳಿಸಿಕೊಳ್ಳುವ ಮನೆಮದ್ದಾಗಿ ಸುದ್ದಿ ರೂಪುಗೊಳ್ಳುತ್ತದೆ ಎಂದು ನಿರೀಕ್ಷಿಸುವ ಆಶಾಭಾವ ಚಿಗುರೊಡೆಯುತ್ತದೆ. ಬಣ್ಣ, ರುಚಿ ಮತ್ತು ಶಕ್ತಿಯ ಅಪವ್ಯಾಖ್ಯಾನ ತಪ್ಪುತ್ತದೆ. ಪ್ರತಿವರ್ಷವೂ ಆಚರಿಸಲ್ಪಡುವ ‘ಪತ್ರಿಕಾ ದಿನಾಚರಣೆ’ಯು ಹಳೆಯದ್ದರ ಆರಾಧನಾ ಮಹೋತ್ಸವವಾಗದೇ ಅರ್ಥಪೂರ್ಣತೆ ದಕ್ಕಿಸಿಕೊಳ್ಳುತ್ತದೆ.
ತಂತ್ರಜ್ಞಾನವೊಂದು ಆವಿಷ್ಕøತವಾಗುತ್ತದೆ. ಆ ಕಾರಣಕ್ಕಾಗಿಯೇ ಪ್ರಯೋಗಶೀಲರೊಬ್ಬರು ಹೊಸದೊಂದನ್ನು ಪ್ರತಿಷ್ಠಾಪಿಸುತ್ತಾರೆ. ಆ ಪ್ರತಿಷ್ಠಾಪನೆಯ ಸುಸಂದರ್ಭವನ್ನು ಸ್ಮರಣೀಯವಾಗಿಸಿಕೊಳ್ಳುವ ಮತ್ತು ಆಯಾ ಕಾಲದಲ್ಲಿ ಹೊಸ ಆಯಾಮ ಪಡೆದುಕೊಳ್ಳುವ ಸಾಧ್ಯತೆಗಳು ವಿಸ್ತಾರವಾಗುತ್ತಾ ಹೋಗುತ್ತವೆ. ಮುದ್ರಣ ತಂತ್ರಜ್ಞಾನ ಭಾರತಕ್ಕೆ ಕಾಲಿಟ್ಟ ನಂತರ ಕನ್ನಡದ್ದೇ ಆದ ಸುದ್ದಿ ಪರಂಪರೆ ಶುರುವಾದ ಐತಿಹಾಸಿಕತೆಯ ಮೆಲುಕಿನ ಸಂದರ್ಭವಾಗಿ ಮಾತ್ರ ಪತ್ರಿಕಾ ದಿನಾಚರಣೆ ಗ್ರಹಿಸಲ್ಪಡಬಾರದು.
ಬದಲಾಗಿ ಸದ್ಯದ ಬಿಕ್ಕಟ್ಟು, ಭವಿಷ್ಯದ ಸವಾಲುಗಳನ್ನು ಎದುರಿಸುವ ಮನೋಸ್ಥೈರ್ಯವನ್ನು ಕನ್ನಡದ ಸುದ್ದಿ ಮಾಧ್ಯಮಗಳು ರೂಢಿಸಿಕೊಳ್ಳಬಹುದಾದ ಸದಭಿರುಚಿಯ ಸಾಧ್ಯತೆಗಳ ಅನ್ವೇಷಣೆಯೊಂದಿಗೆ ಸ್ವಯಂಮೌಲ್ಯಮಾಪನದ ಮಹತ್ವದ ಅವಕಾಶವಾಗಿ ಪ್ರೇರಣೆಯಾಗಬೇಕು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ
- ಜುಲೈ 25ರ ಭರವಸೆ ಜಾರಿಗೆ ವಿಳಂಬ: CJP ತೀವ್ರ ಆಕ್ರೋಶ
- ಇಂಡಿಯಾ ಗೇಟ್ನಿಂದ ಪೊಲೀಸ್ ಕೇಂದ್ರ ಕಚೇರಿವರೆಗೆ ಮೆರವಣಿಗೆ
- NEET ಅಭ್ಯರ್ಥಿಗಳ ಕುಟುಂಬಸ್ಥರು, ಪೊಲೀಸ್ ದೌರ್ಜನ್ಯ ಸಂತ್ರಸ್ತರು ಮುಂಚೂಣಿಯಲ್ಲಿ
- “ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ” ಎಂದ CJP
ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ
ಸುದ್ದಿದಿನ,ನವದೆಹಲಿ: ದೇಶದ ಯುವಜನರಿಗೆ ನೀಡಿರುವ ಭರವಸೆಗಳನ್ನು ಸರ್ಕಾರ ಈಡೇರಿಸಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ಸೆಪ್ಟೆಂಬರ್ 5ರಂದು ನವದೆಹಲಿಯಲ್ಲಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸಲು ಕರೆ ನೀಡಿದೆ. ಜುಲೈ 25ರಂದು ಸಾರ್ವಜನಿಕವಾಗಿ ನೀಡಲಾಗಿದ್ದ ಭರವಸೆಗಳಿಗೆ ಒಂದು ತಿಂಗಳು ಕಳೆದರೂ ಅವುಗಳ ಅನುಷ್ಠಾನಕ್ಕೆ ಸ್ಪಷ್ಟ ಕ್ರಮಗಳು ಗೋಚರಿಸುತ್ತಿಲ್ಲ ಎಂಬುದು CJPಯ ಪ್ರಮುಖ ಆರೋಪವಾಗಿದೆ.
CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದ್ದು, ಸರ್ಕಾರ ಹಾಗೂ ಬಿಜೆಪಿ-ಎನ್ಡಿಎ ಆಡಳಿತದ ರಾಜ್ಯಗಳು ಯುವಜನರಿಗೆ ನೀಡಿದ್ದ ಭರವಸೆಗಳ ಅನುಷ್ಠಾನವನ್ನು ಪರಿಶೀಲಿಸಿದ ಬಳಿಕ ಪ್ರತಿಭಟನೆ ನಡೆಸುವ ನಿರ್ಧಾರವನ್ನು ಸರ್ವಾನುಮತದಿಂದ ಕೈಗೊಳ್ಳಲಾಗಿದೆ ಎಂದು ಪಕ್ಷ ತಿಳಿಸಿದೆ.
http://Visit : www.suddidina.com
ಇಂಡಿಯಾ ಗೇಟ್ನಿಂದ ಮೆರವಣಿಗೆ
ಸೆಪ್ಟೆಂಬರ್ 5ರಂದು ಇಂಡಿಯಾ ಗೇಟ್ನಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಿ ನವದೆಹಲಿ ಪೊಲೀಸ್ ಕೇಂದ್ರ ಕಚೇರಿಯತ್ತ ಸಾಗಲಿದೆ. ಮೃತ NEET ಅಭ್ಯರ್ಥಿಗಳ ಕುಟುಂಬಸ್ಥರು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರು ಮೆರವಣಿಗೆಯ ಮುಂಚೂಣಿಯಲ್ಲಿ ಸಾಗಲಿದ್ದಾರೆ ಎಂದು CJP ಹೇಳಿದೆ.
ದೇಶದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು, ಯುವ ಸಂಘಟನೆಗಳ ಪ್ರತಿನಿಧಿಗಳು ಮತ್ತು ಯುವಜನರು ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಸರ್ಕಾರ ನೀಡಿದ್ದ ಭರವಸೆಗಳನ್ನು ಜಾರಿಗೆ ತರಬೇಕು ಎಂಬ ಒಂದೇ ಪ್ರಮುಖ ಬೇಡಿಕೆಯೊಂದಿಗೆ ಯುವಜನರು ಶಾಂತಿಯುತವಾಗಿ ಧ್ವನಿ ಎತ್ತಲಿದ್ದಾರೆ ಎಂದು ಪಕ್ಷ ಹೇಳಿದೆ.
‘ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ’
ಜುಲೈ 25ರಂದು ನೀಡಿದ ಭರವಸೆಗಳನ್ನು ನಂಬಿ ದೇಶಾದ್ಯಂತ ನಡೆದಿದ್ದ ಪ್ರತಿಭಟನೆಗಳನ್ನು ಯುವಜನರು ಉತ್ತಮ ನಂಬಿಕೆಯಿಂದ ಹಿಂಪಡೆದಿದ್ದರು. ಆದರೆ, ಭರವಸೆಗಳ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವುದು ಯುವಜನರಲ್ಲಿ ಮತ್ತೆ ಅಸಮಾಧಾನ ಮೂಡಿಸಿದೆ ಎಂದು CJP ಆರೋಪಿಸಿದೆ.
“ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ. ನಮ್ಮ ಸದುದ್ದೇಶವನ್ನು ಸರ್ಕಾರ ಯುವಜನರಿಗೆ ದ್ರೋಹ ಮಾಡುವ ಅವಕಾಶವಾಗಿ ಬಳಸಿಕೊಳ್ಳಬಾರದು” ಎಂದು CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಎಚ್ಚರಿಕೆ ನೀಡಿದೆ.
“ಭರವಸೆಗಳನ್ನು ಜಾರಿಗೆ ತರುವ ಬದಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ”
|
ಮಾತಿನಿಂದ ಹಿಂದೆ ಸರಿಯಲು ಸಾಧ್ಯವಿಲ್ಲ
ಜುಲೈ 25ರಂದು ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಸಾರ್ವಜನಿಕವಾಗಿ ನೀಡಿದ್ದ ಭರವಸೆಗಳನ್ನು ಸರ್ಕಾರ ಈಡೇರಿಸಬೇಕು ಎಂಬುದು CJPಯ ಆಗ್ರಹ. ಮಕ್ಕಳನ್ನು ಕಳೆದುಕೊಂಡ ಕುಟುಂಬಗಳು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರ ನೋವಿನ ನಡುವೆ ನಡೆಯಲಿರುವ ಈ ಮೆರವಣಿಗೆ, ಯುವಜನರ ವಿಶ್ವಾಸ ಮತ್ತು ಸರ್ಕಾರದ ಹೊಣೆಗಾರಿಕೆಯ ಪ್ರಶ್ನೆಯನ್ನು ಮುನ್ನೆಲೆಗೆ ತರುವ ಪ್ರಯತ್ನವಾಗಿದೆ.
ಕೇಂದ್ರ ಸರ್ಕಾರ ಭರವಸೆಗಳನ್ನು ಜಾರಿಗೆ ತರುವ ಬದಲು ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ ಎಂದು CJP ಆರೋಪಿಸಿದೆ.
ಸೆಪ್ಟೆಂಬರ್ 5ರಂದು ಹೆಚ್ಚಿನ ಸಂಖ್ಯೆಯಲ್ಲಿ ಇಂಡಿಯಾ ಗೇಟ್ನಲ್ಲಿ ಸೇರಿ ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಯುವಜನರು, ವಿದ್ಯಾರ್ಥಿಗಳು ಹಾಗೂ ಯುವ ಸಂಘಟನೆಗಳಿಗೆ CJP ಮನವಿ ಮಾಡಿದೆ. ಪ್ರತಿಭಟನೆ ಸಂಪೂರ್ಣವಾಗಿ ಶಾಂತಿಯುತ ಮತ್ತು ಪ್ರಜಾಸತ್ತಾತ್ಮಕ ರೀತಿಯಲ್ಲಿ ನಡೆಯಲಿದೆ ಎಂದು ಅದು ಪುನರುಚ್ಚರಿಸಿದೆ.

ದಿನದ ಸುದ್ದಿ
KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
329 ಅಭ್ಯರ್ಥಿಗಳಿಗೆ ಏಕಕಾಲದಲ್ಲಿ ವಿಚಾರಣಾ ನೋಟಿಸ್
-
658 OMR ಕಾರ್ಬನ್ ಶೀಟ್ಗಳು FSLಗೆ
-
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ವಿರುದ್ಧ ED ಗಂಭೀರ ಆರೋಪ
-
₹70–80 ಲಕ್ಷ ಲಂಚದ ಆರೋಪವೂ ತನಿಖೆಯಲ್ಲಿದೆ
-
ಪ್ರಶ್ನೆಪತ್ರ ಸಿದ್ಧತೆ, ಮುದ್ರಣದ CCTV ದೃಶ್ಯಗಳ ಬಗ್ಗೆಯೂ ಅನುಮಾನ
ಸುದ್ದಿದಿನ,ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ಈಗಾಗಲೇ ಜಾರಿ ನಿರ್ದೇಶನಾಲಯ (ED) ರಾಜ್ಯದ ವಿವಿಧೆಡೆ 21ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆಸಿದ್ದು, ಅದರ ಬೆನ್ನಲ್ಲೇ ಅಪರಾಧ ತನಿಖಾ ಇಲಾಖೆ (CID) ಎಲ್ಲಾ 329 ಅಭ್ಯರ್ಥಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.
http://Visit : www.suddidina.com
329 ಅಭ್ಯರ್ಥಿಗಳಿಗೆ ನೋಟಿಸ್ ಏಕೆ?
ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಂದ ಈಗಾಗಲೇ 658 OMR ಕಾರ್ಬನ್ ಶೀಟ್ಗಳನ್ನು ವಶಕ್ಕೆ ಪಡೆಯಲಾಗಿದೆ. ಅವುಗಳನ್ನು ಮೂಲ OMR ಉತ್ತರ ಪತ್ರಿಕೆಗಳೊಂದಿಗೆ ಹೋಲಿಕೆ ಮಾಡಲು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಲಾಗಿದೆ. ಅಭ್ಯರ್ಥಿಗಳು ಗುರುತಿಸಿದ್ದ ಉತ್ತರಗಳ ಕಾರ್ಬನ್ ಪ್ರತಿಯಲ್ಲಿ ಮತ್ತು ಮೂಲ OMRನಲ್ಲಿ ವ್ಯತ್ಯಾಸವಿದೆಯೇ ಎಂಬುದನ್ನು ಪರಿಶೀಲಿಸುವುದು ತನಿಖೆಯ ಪ್ರಮುಖ ಭಾಗವಾಗಿದೆ.
ಇದೀಗ 329 ಅಭ್ಯರ್ಥಿಗಳನ್ನೂ ವಿಚಾರಣೆಗೆ ಒಳಪಡಿಸುವ CID ಕ್ರಮ ಪ್ರಕರಣದ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಿದೆ. ಈ ವಿಚಾರಣೆಯ ಮೂಲಕ ಪರೀಕ್ಷಾ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮ ನಡೆದಿದೆಯೇ, ಅಭ್ಯರ್ಥಿಗಳಿಗೆ ಪ್ರಶ್ನೆಪತ್ರಿಕೆ ಅಥವಾ ಉತ್ತರಗಳ ಮಾಹಿತಿ ಮುಂಚಿತವಾಗಿ ಸಿಕ್ಕಿತೇ, OMR ಉತ್ತರ ಪತ್ರಿಕೆಗಳಲ್ಲಿ ತಿದ್ದುಪಡಿ ನಡೆದಿದೆಯೇ ಎಂಬುದರ ಬಗ್ಗೆ ತನಿಖಾಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.
IAS ಅಧಿಕಾರಿಯತ್ತ ತನಿಖೆಯ ಚಿತ್ತ
ಈ ಪ್ರಕರಣದಲ್ಲಿ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರ ಹೆಸರು ಪ್ರಮುಖವಾಗಿ ಕೇಳಿಬಂದಿದೆ. ಅವರು ಫೆಬ್ರವರಿ 2024ರಿಂದ ಮಾರ್ಚ್ 2026ರವರೆಗೆ KPSCಯ ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಅವರು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿ MSME ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಬೆಂಗಳೂರಿನ ನಿವಾಸ ಸೇರಿದಂತೆ ಉತ್ತರ ಪ್ರದೇಶದ ಬರೇಲಿಯಲ್ಲಿರುವ ನಿವಾಸದ ಮೇಲೂ ED ಶೋಧ ನಡೆಸಿದೆ.
ED ಆರೋಪದ ಪ್ರಕಾರ, ಗಂಗ್ವಾರ್ ಅವರು ತಮ್ಮ ಇಬ್ಬರು ಪುತ್ರರಿಗೆ KPSC ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕಗಳನ್ನು ದೊರಕಿಸಿಕೊಡಲು ವ್ಯಕ್ತಿಯೊಬ್ಬರಿಂದ ಸುಮಾರು ₹1.1 ಕೋಟಿ ಪಡೆದಿದ್ದಾರೆ ಎನ್ನಲಾಗಿದೆ. ಈ ಆರೋಪ ಇನ್ನೂ ತನಿಖೆಯ ಹಂತದಲ್ಲಿದ್ದು, ಆರೋಪ ಸಾಬೀತಾಗಿಲ್ಲ.
ಪ್ರಶ್ನೆಪತ್ರಿಕೆ ಸಿದ್ಧತೆಯಲ್ಲೂ ಅನುಮಾನ
ಪರೀಕ್ಷಾ ನಿಯಂತ್ರಕರಾಗಿದ್ದ ಅವಧಿಯಲ್ಲಿ ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ಮತ್ತು ಮುದ್ರಿಸುವ ಪ್ರಕ್ರಿಯೆಗೆ ಸಂಬಂಧಿಸಿದ CCTV ದೃಶ್ಯಾವಳಿಗಳ ಅನುಪಸ್ಥಿತಿಯನ್ನೂ ED ಅಧಿಕಾರಿಗಳು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಇಂತಹ ಪ್ರಕ್ರಿಯೆಯಲ್ಲಿ CCTV ದಾಖಲೆಗಳು ಪ್ರಮುಖ ಭದ್ರತಾ ಕ್ರಮವಾಗಿರುವುದರಿಂದ, ಅವುಗಳ ಲಭ್ಯತೆ ಮತ್ತು ನಿರ್ವಹಣೆಯೂ ತನಿಖೆಯ ಪ್ರಮುಖ ಅಂಶವಾಗಿದೆ.
ಇದರ ಜೊತೆಗೆ, ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಅಭ್ಯರ್ಥಿಗಳಿಂದ ₹70–80 ಲಕ್ಷದವರೆಗೆ ಲಂಚ ಕೇಳಲಾಗಿದೆ ಎಂಬ ಆರೋಪಗಳೂ ತನಿಖೆಯಲ್ಲಿವೆ. ಪ್ರಶ್ನೆಪತ್ರಿಕೆ ಸೋರಿಕೆ, OMR ತಿದ್ದುಪಡಿ ಮತ್ತು ನೇಮಕಾತಿ ಪ್ರಕ್ರಿಯೆಯ ಮೇಲೆ ಪ್ರಭಾವ ಬೀರಿದ ಆರೋಪಗಳ ಕುರಿತು ತನಿಖೆ ಮುಂದುವರಿದಿದೆ.
KPSCಯಂತಹ ನೇಮಕಾತಿ ಸಂಸ್ಥೆಯ ಮೇಲಿನ ವಿಶ್ವಾಸಕ್ಕೆ ಧಕ್ಕೆ ತರುವ ಆರೋಪಗಳಾಗಿರುವುದರಿಂದ, CID ಮತ್ತು ED ತನಿಖೆಯ ಮುಂದಿನ ಹಂತಗಳು ಮಹತ್ವ ಪಡೆದುಕೊಂಡಿವೆ. 329 ಅಭ್ಯರ್ಥಿಗಳ ವಿಚಾರಣೆ, OMR ಕಾರ್ಬನ್ ಶೀಟ್ಗಳ FSL ವರದಿ ಹಾಗೂ ಹಣಕಾಸು ವ್ಯವಹಾರಗಳ ಪರಿಶೀಲನೆಯ ಬಳಿಕ ಪ್ರಕರಣದ ನಿಜವಾದ ಚಿತ್ರಣ ಇನ್ನಷ್ಟು ಸ್ಪಷ್ಟವಾಗುವ ನಿರೀಕ್ಷೆಯಿದೆ.
ಮೇಲಿನ ಹಣ, ಅಕ್ರಮ ಮತ್ತು ಅಧಿಕಾರಿಯ ವಿರುದ್ಧದ ಆರೋಪಗಳು ತನಿಖಾ ಸಂಸ್ಥೆಗಳು ಮುಂದಿಟ್ಟಿರುವ ಆರೋಪಗಳಾಗಿದ್ದು, ನ್ಯಾಯಾಲಯದಲ್ಲಿ ಸಾಬೀತಾಗುವವರೆಗೆ ಆರೋಪಗಳೆಂದೇ ಪರಿಗಣಿಸಬೇಕೆಂದು ಕೋರ್ಟ್ ತಿಳಿಸಿದೆ.

ದಿನದ ಸುದ್ದಿ
₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ
ರಾಜಾಜಿನಗರದಲ್ಲಿ ಬಿಡಿಎ ಭರ್ಜರಿ ಕಾರ್ಯಾಚರಣೆ: 13,000 ಚದರ ಅಡಿ ಜಾಗ ವಶಕ್ಕೆ
- 13,000 ಚದರ ಅಡಿ ಪ್ರದೇಶ ತೆರವು; ಪೊಲೀಸ್ ಭದ್ರತೆಯಲ್ಲಿ ಬಿಡಿಎ ಕಾರ್ಯಾಚರಣೆ
ನಿವೇಶನ 13 ಮತ್ತು 17ರಲ್ಲಿ ಅನಧಿಕೃತ ನಿರ್ಮಾಣ ತೆರವು; ಪೊಲೀಸ್ ಸಹಕಾರದಲ್ಲಿ ಕಾರ್ಯಾಚರಣೆ
ಸುದ್ದಿದಿನ,ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅನಧಿಕೃತ ನಿರ್ಮಾಣಗಳ ವಿರುದ್ಧದ ತನ್ನ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು, ರಾಜಾಜಿನಗರ ಬಡಾವಣೆಯ ಇಂಡಸ್ಟ್ರೀಯಲ್ ಸಬರ್ಬ್ 2ನೇ ಹಂತದಲ್ಲಿ ಮಹತ್ವದ ತೆರವು ಕಾರ್ಯಾಚರಣೆ ನಡೆಸಿದೆ. ಕಾರ್ಯಾಚರಣೆಯಲ್ಲಿ ಸುಮಾರು ₹25 ಕೋಟಿ ಮೌಲ್ಯದ ಆಸ್ತಿಯನ್ನು ಪ್ರಾಧಿಕಾರ ತನ್ನ ಸುಪರ್ದಿಗೆ ಪಡೆದುಕೊಂಡಿದೆ.
ಬೆಂಗಳೂರು ಉತ್ತರ ತಾಲ್ಲೂಕಿನ ಯಶವಂತಪುರ ಹೋಬಳಿಯ ಪೀಣ್ಯ ಗ್ರಾಮದ ಸರ್ವೆ ನಂಬರ್ 79 ಮತ್ತು 70ರಲ್ಲಿ ಬರುವ ಇಂಡಸ್ಟ್ರೀಯಲ್ ಸಬರ್ಬ್, 2ನೇ ಹಂತ, ರಾಜಾಜಿನಗರ ಬಡಾವಣೆಯ ನಿವೇಶನ ಸಂಖ್ಯೆ 13 ಮತ್ತು 17ರಲ್ಲಿ ಈ ಕಾರ್ಯಾಚರಣೆ ನಡೆದಿದೆ. ಸುಮಾರು 13,000 ಚದರ ಅಡಿ ವಿಸ್ತೀರ್ಣದ ಪ್ರದೇಶದಲ್ಲಿ ನಿರ್ಮಿಸಲಾಗಿದ್ದ ಅನಧಿಕೃತ ಕಟ್ಟಡ ಹಾಗೂ ನಿರ್ಮಾಣಗಳನ್ನು ತೆರವುಗೊಳಿಸಿ, ಜಾಗವನ್ನು ಬಿಡಿಎ ವಶಕ್ಕೆ ಪಡೆದುಕೊಂಡಿದೆ.
http://Visit : www.suddidina.com
ಅನಧಿಕೃತ ನಿರ್ಮಾಣಕ್ಕೆ ಬಿಡಿಎ ಬ್ರೇಕ್:
ಬಿಡಿಎಗೆ ಸೇರಿದ ಅಥವಾ ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಜಾಗಗಳಲ್ಲಿ ನಿಯಮಬಾಹಿರವಾಗಿ ನಿರ್ಮಾಣವಾಗುತ್ತಿರುವ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳುವ ಭಾಗವಾಗಿ ಈ ಕಾರ್ಯಾಚರಣೆ ನಡೆಸಲಾಗಿದೆ. ತೆರವು ಕಾರ್ಯಾಚರಣೆಯ ಬಳಿಕ ಆಸ್ತಿಯನ್ನು ಪ್ರಾಧಿಕಾರದ ನೇರ ಸುಪರ್ದಿಗೆ ತೆಗೆದುಕೊಳ್ಳಲಾಗಿದ್ದು, ಸಾರ್ವಜನಿಕ ಹಾಗೂ ಸರ್ಕಾರಿ ಆಸ್ತಿಗಳ ಸಂರಕ್ಷಣೆಗೆ ಬಿಡಿಎ ಕೈಗೊಳ್ಳುತ್ತಿರುವ ಕ್ರಮಕ್ಕೆ ಇದು ಮತ್ತೊಂದು ಉದಾಹರಣೆಯಾಗಿದೆ.
ಸುಮಾರು ₹25 ಕೋಟಿ ಮೌಲ್ಯದ ಆಸ್ತಿ ಇರುವುದರಿಂದ, ಈ ಕಾರ್ಯಾಚರಣೆ ನಗರದ ಆಸ್ತಿ ಸಂರಕ್ಷಣೆ ಹಾಗೂ ಅನಧಿಕೃತ ನಿರ್ಮಾಣಗಳ ನಿಯಂತ್ರಣದ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ. ದೊಡ್ಡ ಪ್ರಮಾಣದ ಭೂಮಿಯಲ್ಲಿ ನಿಯಮ ಉಲ್ಲಂಘಿಸಿ ನಿರ್ಮಾಣ ನಡೆಸಿದರೆ ಯಾವುದೇ ಕಾರಣಕ್ಕೂ ಅದನ್ನು ಮುಂದುವರಿಸಲು ಅವಕಾಶ ನೀಡುವುದಿಲ್ಲ ಎಂಬ ಸಂದೇಶವನ್ನು ಈ ಕ್ರಮ ನೀಡಿದೆ.
https://x.com/BDAOfficialGok/status/2092121239175512436?s=20
ಬಹು ಇಲಾಖೆಗಳ ಸಮನ್ವಯದಲ್ಲಿ ಕಾರ್ಯಾಚರಣೆ:
ತೆರವು ಕಾರ್ಯಾಚರಣೆಯನ್ನು ಬಿಡಿಎಯ ವಲಯ ಆಯುಕ್ತರು, ಆರಕ್ಷಕ ಅಧೀಕ್ಷಕರು, ಅಭಿಯಂತರ ಅಧಿಕಾರಿ-1, ಕಾರ್ಯನಿರತ ಆರಕ್ಷಕ ಪಡೆ, ಪಶ್ಚಿಮ ವಿಭಾಗದ ಅಭಿಯಂತರರು ಹಾಗೂ ಸರ್ವೆಯರ್ಗಳು ಒಳಗೊಂಡ ತಂಡ ಕೈಗೊಂಡಿತು. ಸ್ಥಳೀಯ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಲಾಗಿದ್ದು, ಯಾವುದೇ ಅಡಚಣೆ ಉಂಟಾಗದಂತೆ ಅಗತ್ಯ ಭದ್ರತಾ ವ್ಯವಸ್ಥೆ ಮಾಡಲಾಗಿತ್ತು.
ಸ್ಥಳ ಪರಿಶೀಲನೆ, ನಿರ್ಮಾಣ ತೆರವು ಹಾಗೂ ಜಾಗದ ಸ್ವಾಧೀನ ಪ್ರಕ್ರಿಯೆಯನ್ನು ಸಂಬಂಧಪಟ್ಟ ಅಧಿಕಾರಿಗಳು ಸಮನ್ವಯದಿಂದ ಪೂರ್ಣಗೊಳಿಸಿದರು. ಕಾರ್ಯಾಚರಣೆ ಬಳಿಕ ತೆರವುಗೊಳಿಸಲಾದ ಪ್ರದೇಶವನ್ನು ಬಿಡಿಎ ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ.
ನಗರದ ಭೂ ಸಂಪತ್ತಿನ ರಕ್ಷಣೆಗೆ ಕಠಿಣ ಹೆಜ್ಜೆ
ಬೆಂಗಳೂರು ವೇಗವಾಗಿ ವಿಸ್ತರಿಸುತ್ತಿರುವ ಸಂದರ್ಭದಲ್ಲಿ ಸರ್ಕಾರಿ ಹಾಗೂ ಪ್ರಾಧಿಕಾರಕ್ಕೆ ಸೇರಿದ ಜಾಗಗಳ ಮೇಲೆ ಅಕ್ರಮ ನಿರ್ಮಾಣಗಳು ನಡೆಯದಂತೆ ನಿಗಾ ವಹಿಸುವುದು ಪ್ರಮುಖ ಸವಾಲಾಗಿದೆ. ಈ ಹಿನ್ನೆಲೆಯಲ್ಲಿ ಬಿಡಿಎ ಕೈಗೊಂಡಿರುವ ₹25 ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಳ್ಳುವ ಕ್ರಮ, ಅನಧಿಕೃತ ನಿರ್ಮಾಣಗಳ ವಿರುದ್ಧದ ಕಾರ್ಯಾಚರಣೆಗೆ ಮತ್ತಷ್ಟು ಬಲ ನೀಡಿದೆ.
ಬೆಂಗಳೂರು ನಗರದ ಭೂ ಸಂಪತ್ತನ್ನು ಕಾಪಾಡುವ ನಿಟ್ಟಿನಲ್ಲಿ ಬಿಡಿಎಯ ಈ ತೆರವು ಕಾರ್ಯಾಚರಣೆ, ನಿಯಮ ಉಲ್ಲಂಘಿಸುವವರಿಗೆ ಎಚ್ಚರಿಕೆಯ ಸಂದೇಶವಾಗಿದ್ದು, ಮುಂದಿನ ದಿನಗಳಲ್ಲೂ ಇಂತಹ ಕಾರ್ಯಾಚರಣೆಗಳು ಮುಂದುವರಿಯುವ ಸಾಧ್ಯತೆ ಇದೆ.

-
ಅಂತರಂಗ5 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ6 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ದಿನದ ಸುದ್ದಿ2 days agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ3 days agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ2 days agoಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
-
ದಿನದ ಸುದ್ದಿ3 days agoಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!
-
ದಿನದ ಸುದ್ದಿ3 days agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ







