ದಿನದ ಸುದ್ದಿ
ಮಾಧ್ಯಮ ಜ್ಞಾನ ಕುರಿತು ಹೊಸ ಕೋರ್ಸ್ ಸೇರ್ಪಡೆಗೆ ಕ್ರಮ: ಪ್ರೊ.ಎಸ್.ಆರ್.ನಿರಂಜನ ಅಭಿಮತ
ಸುದ್ದಿದಿನ,ಬೆಂಗಳೂರು: ಇಂದಿನ ವಿದ್ಯಾರ್ಥಿಗಳಲ್ಲಿ ಮಾಧ್ಯಮ ಸಾಕ್ಷರತೆ ಬಗ್ಗೆ ಅರಿವು ಮೂಡಿಸುವ ಅಗತ್ಯವಿದೆ. ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ಮಾಧ್ಯಮ ಸಾಕ್ಷರತೆ, ಸಂವಹನ ಪ್ರಾಮುಖ್ಯತೆ ಕುರಿತಾದ ನವೀನವಾದ ನಾನಾ ಕೋರ್ಸ್ಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಕುರಿತು ಗಂಭೀರವಾಗಿ ಚಿಂತಿಸಲಿದೆಂದು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ.ಎಸ್.ಆರ್.ನಿರಂಜನ ಹೇಳಿದರು.
ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದ ಸುವರ್ಣ ಮಹೋತ್ಸವದ (1973-2023) ಪ್ರಯುಕ್ತ ‘ಮೀಡಿಯಾ ಸ್ಪಿಯರ್- 2024, “ಭಾರತೀಯ ಮಾಧ್ಯಮ ಉದ್ಯಮದ’ ರೂಪಾಂತರ” ರಾಷ್ಟ್ರೀಯ ಸಮ್ಮೇಳನವನ್ನು ಬೆಂಗಳೂರು ವಿವಿಯ ಸಂವಹನ ವಿಭಾಗ, ಭಾರತೀಯ ಸಂವಹನ ಕಾಂಗ್ರೆಸ್ (ಐಸಿಸಿ) ಹಾಗೂ ಕರ್ನಾಟಕ ರಾಜ್ಯ ಪತ್ರಿಕೋದ್ಯಮ ಮತ್ತು ಸಂವಹನ ಶಿಕ್ಷಕರ ಸಂಘ (ಕೆಎಸ್ ಜೆಸಿಟಿಎ) ಸಹಯೋಗದೊಂದಿಗೆ ಜ್ಞಾನಭಾರತಿ ಆವರಣದಲ್ಲಿರುವ ಪ್ರೊ.ವೆಂಕಟಗಿರಿಗೌಡ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅಡಿಯಲ್ಲಿ ಕೌಶಲ್ಯಧಾರಿತ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಮಾಧ್ಯಮ ಸಾಕ್ಷರತೆ ಮತ್ತು ಸಂವಹನ ಜ್ಞಾನ ಕೂಡ ಪ್ರಮುಖ ಕೌಶಲ್ಯವಾಗಿದ್ದು ವಿದ್ಯಾರ್ಥಿಗಳ ಪಠ್ಯಶಿಕ್ಷಣ ಕ್ರಮದಲ್ಲಿ ಮಾಧ್ಯಮ ಜ್ಞಾನವನ್ನು ಕೂಡ ವಿಷಯವಾಗಿ ಸೇರ್ಪಡಿಸಲಾಗುವುದೆಂದು ಭರವಸೆ ನೀಡಿದರು.
“ಮಾಧ್ಯಮ ಸಮಾಜದ ಬಹುಮುಖ್ಯ ಅಂಗವಾಗಿದ್ದು,
ಸಮಾಜದ ಗಟ್ಟಿಧ್ವನಿಯಾಗಿ, ಕನ್ನಡಿಯಾಗಿ ಕಾರ್ಯ ನಿರ್ವಹಿಸುತ್ತಿದೆ.1970-1980 ಅವಧಿಯ ದಶಕದ ಬಳಿಕ ಮಾಧ್ಯಮ ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆಗಳಾಗಿದೆ. ಹಾಗೆಯೇ ಒಂದು ಕಾಲದಲ್ಲಿ ನಿರ್ದಿಷ್ಟ ವಿಷಯದ ಕುರಿತು ಮಾಹಿತಿ ತಿಳಿದುಕೊಳ್ಳಲು ಅಷ್ಟೇ ಸೀಮಿತವಾಗಿದ್ದ ಮಾಧ್ಯಮ ಇಂದು ಬಹುದೊಡ್ಡ ಉದ್ಯಮವಾಗಿ ಬೆಳೆದುನಿಂತಿದೆ. ದೇಶದ ಆರ್ಥಿಕತೆಯ ಪ್ರಮುಖ ವಲಯವಾಗಿ ಮಾಧ್ಯಮ ನಿಂತಿದೆ. ಭಾರತದ ಜಿಡಿಪಿ ಏರಿಕೆಗೆ ಮನರಂಜನಾ ಮತ್ತು ಮಾಧ್ಯಮ ಕ್ಷೇತ್ರಗಳ ಕೊಡುಗೆ ಕೂಡ ಅಪಾರವಾಗಿದೆ.ಭಾರತದ ಮಾಧ್ಯಮ ಮನರಂಜನೆ, ಕ್ರೀಡೆ, ತಂತ್ರಜ್ಞಾನ, ಮುದ್ರಣ, ಡಿಜಿಟಲ್, ಸಾಮಾಜಿಕ ಜಾಲತಾಣ ಸೇರಿದಂತೆ ಅನೇಕ ರೂಪಾಂತರಗಳು ತಲೆ ಎತ್ತಿ ಬೃಹತ್ ಉದ್ಯಮವಲಯವಾಗಿದೆ.
ಮಾಧ್ಯಮ ಕ್ಷೇತ್ರ ಇಷ್ಟೆಲ್ಲಾ ಪ್ರಗತಿಯನ್ನು ಕಂಡಿದ್ದರೂ ವೃತ್ತಿಪರರ ಕೊರತೆ ಎದ್ದುಕಾಣುತ್ತಿದೆ. ವಿದ್ಯಾರ್ಥಿಗಳಲ್ಲಿ ಕೌಶಲ್ಯ, ಸಂವಹನದ ಕೊರತೆ ಕಾಡುತ್ತಿದೆ. ದೇಶದ ಮುಖ್ಯವಲಯದಲ್ಲಿ ಕಾರ್ಯನಿರ್ವಹಿಸುವ ವಿದ್ಯಾರ್ಥಿಗಳಲ್ಲಿ ಗುಣಮಟ್ಟ ಹೆಚ್ಚಿಸುವ ಪಾತ್ರ ವಿಶ್ವವಿದ್ಯಾಲಯ, ಶಿಕ್ಷಣ ಸಂಸ್ಥೆಗಳ ಮೇಲಿದೆ. ರಾಜ್ಯದ ಉನ್ನತ ಶಿಕ್ಷಣ ಪರಿಷತ್ತು ಕೂಡ ಈ ಬಗ್ಗೆ ಗಂಭೀರವಾಗಿ ಚಿಂತಿಸಲಿದೆ. ಪ್ರಜಾಪ್ರಭುತ್ವದ 4ನೇ ಅಂಗವಾಗಿರುವ ಮಾಧ್ಯಮದ ಪಾತ್ರ, ಶಕ್ತಿ, ಬಳಕೆ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಸಂವಹನ ವಿಭಾಗದ ವತಿಯಿಂದ ಈ ಕುರಿತು ಒಂದು ಪ್ರಸ್ತಾವನೆ ಸಲ್ಲಿಸುವಂತೆ ಸಲಹೆ ನೀಡಿದರು. ಇದರ ಬಗ್ಗೆ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನಲ್ಲಿ ಈ ಕುರಿತು ಚರ್ಚಿಸಿ ಅನುಷ್ಠಾನಕ್ಕೆ ಕ್ರಮ ವಹಿಸುವುದಾಗಿ ಭರವಸೆ ಕೂಡ ನೀಡಿದರು. ವಿದ್ಯಾರ್ಥಿಗಳಲ್ಲಿ ಕೌಶಲ್ಯ ವೃದ್ದಿಸುವ ಗುರಿ ಹೊಂದಿರುವ ರಾಜ್ಯ ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸುವುದು” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಬಿ.ಕೆ. ರವಿ , ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವ ಶೇಕ್ ಲತೀಫ್, ಬೆಂಗಳೂರು ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ. ಶ್ರೀನಿವಾಸ್ ಚೌಡಪ್ಪ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರಾದ ಡಾ. ಬಿ. ಶೈಲಶ್ರೀ, ಭೂಪಾಲ್ ನ ಪತ್ರಿಕೋದ್ಯಮ ಮತ್ತು ಸಂವಹನ ಮಖನ್ ಲಾಲ್ ಚತುರ್ವೇದಿ ರಾಷ್ಟ್ರೀಯ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಕೆ.ಜಿ. ಸುರೇಶ್, ಪಶ್ಚಿಮ ಬಂಗಾಳದ ವಿಶ್ವ ಭಾರತಿ ಕೇಂದ್ರೀಯ ವಿಶ್ವವಿದ್ಯಾಲಯದ ಮುಖ್ಯಸ್ಥರಾಗಿರುವ ಪ್ರೊ. ಬಿಪ್ಲಾಬ್ ಲೋಹೋ ಚೌದರಿ, (ಒಡಿಶಾ) ಭುವನೇಶ್ವರ್ ನ ಉತ್ಕಲ್ ವಿಶ್ವವಿದ್ಯಾಲಯದ ಮಾಧ್ಯಮ ಅಧ್ಯಯನ ಸಂಸ್ಥೆಯ ನಿರ್ದೇಶಕರಾದ ಪ್ರೊ. ಉಪೇಂದ್ರ ಪಾಢಿ, ವಿವಿಯ ಮತ್ತಿತರರು ಬೋಧಕ ಮತ್ತು ಭೋಧಕೇತರ ವರ್ಗದವರು, ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿ ಸಮೂಹ, ಉಪಸ್ಥಿತರಿದ್ದರು. ಕೊನೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು.
- ಬೆಂಗಳೂರು ವಿಶ್ವವಿದ್ಯಾಲಯ ಸಂವಹನ ವಿಭಾಗ ಸುವರ್ಣ ಮಹೋತ್ಸವ ಆಚರಿಸುತ್ತಿರುವುದು ಸಂಭ್ರಮ ಮತ್ತು ಹೆಮ್ಮೆಯ ಕ್ಷಣ. ಭಾರತದಲ್ಲಿ ದೂರದರ್ಶನ ಉದ್ಯಮದ ಬೆಳವಣಿಗೆಗೆ ಬೆಂಗಳೂರು ವಿವಿಯ ಸಂವಹನ ವಿಭಾಗ ಪ್ರಮುಖ ಕಾರಣವಾಗಿದೆ. ದೇಶದಲ್ಲಿ ಪ್ರಥಮಬಾರಿಗೆ ದೂರದರ್ಶನ ಶಿಕ್ಷಣ ಆರಂಭಿಸಿದ ಕೀರ್ತಿಯನ್ನು ಹೊಂದಿದೆ.
–ಪ್ರೊ.ಬಿ.ಕೆ. ರವಿ, ಕುಲಪತಿ, ಕೊಪ್ಪಳ ವಿಶ್ವವಿದ್ಯಾಲಯ, ಕೊಪ್ಪಳ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ – ಪ್ರಾಣಿಬಲಿ ಮತ್ತು ಮದ್ಯಪಾನ ನಿಷೇಧ, ಬ್ಯಾನರ್ ಅಳವಡಿಕೆಗೆ ಅನುಮತಿ ಕಡ್ಡಾಯ
ಸುದ್ದಿದಿನ,ದಾವಣಗೆರೆ:ನಗರದೇವತೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆಯು ಫೆ. 22 ರಿಂದ 25 ರವರೆಗೆ 3 ದಿನಗಳ ಕಾಲ ನಡೆಯಲಿದ್ದು, ಭಕ್ತಿಪೂರಕವಾಗಿ ವಿಜೃಂಭಣೆಯಿಂದ ನಡೆಯಲು ಕ್ರಮವಹಿಸಲಾಗಿದೆ, ಜಾತ್ರೆ ಸಮಯದಲ್ಲಿ ದೇವಸ್ಥಾನದ ಸುತ್ತಮುತ್ತಲು ಪ್ರಾಣಿಬಲಿಯನ್ನು ನಿಷೇಧಿಸಲಾಗಿದೆ. ಹಾಗೂ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಮುಂಜಾಗ್ರತೆಯಾಗಿ ಮದ್ಯಪಾನವನ್ನು ನಿಷೇದಿಸಲಾಗಿದೆ. ಸಾರ್ವಜನಿಕರು ಸಹಕಾರ ನೀಡುವಂತೆ ಹಾಗೂ ಬ್ಯಾನರ್ ಅಳವಡಿಕೆಗೆ ಅನುಮತಿ ಕಡ್ಡಾಯವೆಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ತಿಳಿಸಿದರು.
ಅವರು ಫೆ.17 ರಂದು ನಗರದೇವತೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ ಮಹೋತ್ಸವದ ಅಂಗವಾಗಿ ದೇವಸ್ಥಾನದ ಬಳಿ ಏರ್ಪಡಿಸಿದ್ದ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಚಿವರ ಅಧ್ಯಕ್ಷತೆಯಲ್ಲಿ ಮತ್ತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಒಟ್ಟು ಐದು ಸಭೆಗಳನ್ನು ನಡೆಸಲಾಗಿದೆ. ಕಳೆದ ಜಾತ್ರೆಯಲ್ಲಿನ ಅನುಭವಗಳ ಆಧಾರದ ಮೇಲೆ ಪೊಲೀಸ್ ಅಧಿಕಾರಿಗಳು ಮತ್ತು ಧರ್ಮದರ್ಶಿಗಳು ನೀಡಿದ ಸಲಹೆಗಳನ್ನು ಈ ಬಾರಿ ಜಾರಿಗೆ ತರಲಾಗುತ್ತಿದೆ. ದೇವಸ್ಥಾನದ ಸುತ್ತಮುತ್ತಲ 500 ಮೀಟರ್ ವ್ಯಾಪ್ತಿಯಲ್ಲಿ ಸುಮಾರು ವರ್ಷಗಳಿಂದ ಸ್ವಚ್ಛಗೊಳಿಸದ ಚರಂಡಿಗಳನ್ನು ಸ್ವಚ್ಛಗೊಳಿಸಲಾಗಿದೆ. ಈ ಪ್ರಕ್ರಿಯೆಯಲ್ಲಿ ಸುಮಾರು 100 ಟ್ರಕ್ ಲೋಡ್ಗಳಷ್ಟು ಹೂಳನ್ನು ಹೊರತೆಗೆಯಲಾಗಿದೆ. ಬಾರ್ಲೈನ್ ರಸ್ತೆ, ರೇಣುಕಾ ಮಂದಿರ ರಸ್ತೆ ಮತ್ತು ಡಬಲ್ ರೋಡ್ಗಳಲ್ಲಿ ಚರಂಡಿ ನೀರು ಉಕ್ಕಿ ಹರಿಯದಂತೆ ಕ್ರಮ ಕೈಗೊಂಡು ರಸ್ತೆಗಳನ್ನು ಸರಿಪಡಿಸಲಾಗಿದೆ ಎಂದು ತಿಳಿಸಿದರು.
ಬೆಸ್ಕಾಂ ಲೈನ್ಗಳಲ್ಲಿನ ತೊಂದರೆಗಳನ್ನು ಸರಿಪಡಿಸಲಾಗಿದೆ ಮತ್ತು ತೆರೆದಿದ್ದ ಟ್ರಾನ್ಸ್ಫಾರ್ಮರ್ಗಳನ್ನು ಮುಚ್ಚಿ ರಕ್ಷಣೆ ಒದಗಿಸಲಾಗಿದೆ. ಆರೋಗ್ಯ ಇಲಾಖೆಯ ಮೂಲಕ ಸೊಳ್ಳೆಗಳ ಕಾಟವಿಲ್ಲದಂತೆ ಮತ್ತು ನೀರು ನಿಲ್ಲದಂತೆ ಕ್ರಮ ವಹಿಸಲಾಗಿದೆ. ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸೇರಿ ಸುಗಮ ಸಂಚಾರಕ್ಕಾಗಿ ಎರಡು ಬಾರಿ ಸ್ಥಳ ಪರಿಶೀಲನೆ ನಡೆಸಲಾಗಿದೆ. ದೇವಸ್ಥಾನದ ಸುತ್ತಮುತ್ತಲು ಇರುವ ದೇವಸ್ಥಾನಗಳು ಮತ್ತು ಕಳೆದ ಬಾರಿ ಬಿಟ್ಟುಹೋಗಿದ್ದ ದೇವಸ್ಥಾನಗಳಿಗೆ ಬಣ್ಣ ಬಳಿಯುವ ಕೆಲಸ ನಡೆಯುತ್ತಿದ್ದು, ಎರಡು ದಿನಗಳಲ್ಲಿ ಪೂರ್ಣಗೊಳ್ಳಲಿದೆ. ಶಿವಾಜಿ ಮಹಾರಾಜರು ಮತ್ತು ಸಂಗೊಳ್ಳಿ ರಾಯಣ್ಣನವರಂತಹ ಮಹನೀಯರ ಪ್ರತಿಮೆಗಳನ್ನು ಜಲಪ್ರೋಕ್ಷಣೆ ಮಾಡಿ ಸ್ವಚ್ಛಗೊಳಿಸಲು ಆದೇಶಿಸಲಾಗಿದೆ, ಸ್ವಚ್ಛತಾ ಕಾರ್ಯ ಮುಗಿದ ನಂತರ ಪ್ರಮುಖ ರಸ್ತೆ ಮತ್ತು ವೃತ್ತಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲು ವ್ಯವಸ್ಥೆ ಮಾಡಲಾಗಿದೆ.
ಸುರಕ್ಷತಾ ದೃಷ್ಠಿಯಿಂದ ದುರ್ಗಾಂಭ ದೇವಸ್ಥಾನದ ಸುತ್ತಮುತ್ತಲು ಉಪವಿಭಾಗಾಧಿಕಾರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು, ಪಶುಪಾಲನೆ ಮತ್ತು ಪಶುವೈದ್ಯಕೀಯ ಇಲಾಖೆಯ ಉಪ ನಿರ್ದೇಶಕರು ಇವರುಗಳನ್ನ ನೊಡೆಲ್ ಅಧಿಕಾರಿಗಳು, ಚೌಡೇಶ್ವರಿ ದೇವಸ್ಥಾನ ಮತ್ತು ವಿನೋಬ್ ನಗರ ಸುತ್ತಮುತ್ತಲು ನೋಡಲ್ ಅಧಿಕಾರಿಗಳು ಮತ್ತು ಕಾಯಿ ಪೇಟೆ ಮತ್ತು ವಸಂತ ಟಾಕೀಸ್ ಪ್ರದೇಶಗಳಿಗೆ ಮಹಾನಗರ ಪಾಲಿಕೆ ಆಯುಕ್ತರು ರವರನ್ನು ನೋಡಲ್ ಅಧಿಕಾರಿಗಳನ್ನು ನೇಮಿಸಿದ್ದು, ಸದರಿ ಅಧಿಕಾರಿಗಳು ಯಾವುದೇ ಅಹಿತಕರ ಘಟನೆ ನಡೆಯದಂತೆ ಸುರಕ್ಷತಾ ಕ್ರಮಗಳನ್ನು ವಹಿಸುವರು ಎಂದು ತಿಳಿಸಿದರು.
ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ಮಾತನಾಡಿ ದುರ್ಗಾಂಭಿಕ ದೇವಸ್ಥಾನದ ಸುತ್ತಮುತ್ತಲ ದೇವಸ್ಥಾನಗಳಿಗೆ ಸುಮಾರು 51 ಲಕ್ಷ ವೆಚ್ಚದಲ್ಲಿ ಬಣ್ಣವನ್ನು ಬಳಿಯಲಾಗುತ್ತಿದೆ, ದೇವಸ್ಥಾನದ ಬಳಿ 24 ಗಂಟೆ ಕುಡಿಯುವ ನೀರು , 30 ಸ್ವಚ್ಚತಾ ಸಿಬ್ಬಂದಿಗಳ ನೇಮಕ, ಉರುಳು ಸೇವೆ ಮಾಡಲು ಮರಳು, ಸ್ನಾನ ಮಾಡಲು 20 ನಳಗಳ ವ್ಯವಸ್ಥೆ ಮಾಡಲಾಗಿದ್ದು ಇವುಗಳಿಗೆ 11 ಲಕ್ಷ ವೆಚ್ಚ ಮಾಡಲಾಗುತ್ತಿದೆ. ಚೌಡೇಶ್ವರಿನಗರ, ವಿನೋಬ ನಗರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. ಮತ್ತು ಒಳಚರಂಡಿ ವ್ಯವಸ್ಥೆಯನ್ನು ದುರಸ್ತಿ ಮಾಡಲಾಗಿದೆ. ದೇವಸ್ಥಾನದ ಸುತ್ತಮುತ್ತಲು, ಸಂಗೊಳ್ಳಿ ರಾಯಣ್ಣ ಸರ್ಕಲ್, ಗುಂಡಿ ಸರ್ಕಲ್, ದಾವಣಗೆರೆ ನಗರಕ್ಕೆ ಪ್ರವೇಶಿಸುವ ರಸ್ತೆಗಳು, ಮಹಾನಗರ ಪಾಲಿಕೆ ಕಚೇರಿ, ಡಾ.ಬಿ.ಆರ್.ಅಂಬೇಡ್ಕರ್ ಸರ್ಕಲ್ ಗಳಲ್ಲಿ ದೀಪಾಲಂಕಾರ ಮಾಡಲಾಗಿದೆ , ದೇವಸ್ಥಾನದ ಸುತ್ತಮುತ್ತಲು ಪಾರ್ಕಿಂಗ್ ಸ್ಥಳದಲ್ಲಿ ಶೌಚಾಲಯಗಳನ್ನು ಅಳವಡಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್ ಹೆಚ್.ಟಿ ಅವರು ಮಾತನಾಡಿ, ನಗರದೇವತೆ ಶ್ರೀ ದುರ್ಗಾಂಬಿಕಾ ದೇವಿ ಜಾತ್ರೆ ಪ್ರಯುಕ್ತ ದೇವಸ್ಥಾನದ ಸುತ್ತಮುತ್ತಲು ಸಿಸಿಟಿವಿಗಳನ್ನು ಅಳವಡಿಸಲಾಗಿದೆ, ಸರಗಳ್ಳತನ, ಮಹಿಳೆಯರು ಮತ್ತು ಮಕ್ಕಳ ಸುರಕ್ಷತಾ ದೃಷ್ಠಿಯಿಂದ ಅಗತ್ಯ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ, ದೇವಸ್ಥಾನದ ಪಕ್ಕದಲ್ಲಿ ತಾತ್ಕಾಲಿಕ ಪೊಲೀಸ್ ಠಾಣೆಯನ್ನು ತೆರೆಯಲಾಗಿದೆ. ಭಕ್ತಾಧಿಗಳಿಗೆ ಹಾಗೂ ವಿವಿಐಪಿಗಳಿಗೆ ದರ್ಶನಕ್ಕೆ ಅನುಕೂಲಕರವಾಗಲು ಬ್ಯಾರಿಕೇಡ್ ವ್ಯವಸ್ಥೆ ಮಾಡಲಾಗಿದೆ.
ಸುಗಮ ಸಂಚಾರ ನಡೆಸಲು ಪೊಲೀಸ್ ವ್ಯವಸ್ಥೆ ಮಾಡಲಾಗಿದೆ. ಬ್ಯಾನರ್ ಮತ್ತು ಬಂಟಿಂಗ್ ಅಳವಡಿಸಲು ಕಡ್ಡಾಯವಾಗಿ ಅನುಮತಿ ಪಡೆದು ಅಳವಡಿಸಬೇಕು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ದ ಕ್ರಮಕೈಗೊಳ್ಳಲಾಗುವುದು ಮತ್ತು ಪ್ರಜೋದನಕಾರಿ ಮತ್ತು ದೇವಸ್ಥಾನಕ್ಕೆ ಸಂಬಂಧಿಸಿದ ಪ್ರಾಣಿಬಲಿ ಕುರಿತು ಹಳೆಯ ಛಾಯಾಚಿತ್ರಗಳನ್ನು ಅಪ್ ಲೋಡ್ ಮಾಡಬಾರದು, ಕಾನೂನು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೆಲಸಗಳನ್ನು ಮಾಡಬಾರದು ಎಂದು ತಿಳಿಸಿದರು.
ದೂಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಸಿಇಒ ಗಿತ್ತೇ ಮಾಧವ ವಿಠಲ್ ರಾವ್, ಶ್ರೀ ದುರ್ಗಾಂಭಿಕಾ ದೇವಿ ಜಾತ್ರೆ ಸಮಿತಿಯ ಸದಸ್ಯರುಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಯಶಸ್ವಿ ಬೃಹತ್ ಉದ್ಯೋಗ ಮೇಳಕ್ಕೆ ಕ್ರಮವಹಿಸಿ: ಡಿಸಿ ಗಂಗಾಧರ್ ಸ್ವಾಮಿ
ಸುದ್ದಿದಿನ,ದಾವಣಗೆರೆ:ನಗರದ ಎಂಸಿಸಿ ಬ್ಲಾಕ್ ನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೆಬ್ರವರಿ 23 ರಂದು ಉದ್ಯೋಗ ಮೇಳ ನಡೆಯಲಿದೆ, ಮೇಳದಲ್ಲಿ ಮೂಲಭೂತ ಸೌಕರ್ಯಗಳನ್ನು ಒಳಗೊಂಡಂತೆ ಕಾರ್ಯಕ್ರಮ ಯಶಸ್ವಿಗೆ ಅಧಿಕಾರಿಗಳು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಅವರು ತಿಳಿಸಿದರು .
ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಬೃಹತ್ ಉದ್ಯೋಗ ಮೇಳ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು .
ಬೃಹತ್ ಉದ್ಯೋಗ ಮೇಳಕ್ಕಾಗಿ ಈಗಾಗಲೇ ಪೋರ್ಟಲ್ ಮೂಲಕ ನೋಂದಣಿ ಆರಂಭವಾಗಿದ್ದು, 45ಕ್ಕೂ ಹೆಚ್ಚು ಕಂಪನಿಗಳು ನೋಂದಾಯಿಸಿಕೊಂಡಿವೆ. ಇನ್ನು ಸುಮಾರು 20 ಕಂಪನಿಗಳು ಬರುವ ಸಾಧ್ಯತೆ ಇದೇ, ಇದರಲ್ಲಿ ಐಟಿ, ಮಾಸ್ಟರ್ ಡಿಗ್ರಿ, ಐಟಿಐ ಮತ್ತು ಎಸ್ಎಸ್ಎಲ್ಸಿ, ಪಿಯುಸಿ ಅಭ್ಯರ್ಥಿಗಳಿಗೆ ಐಟಿ ವಲಯ ಬ್ಯಾಂಕ್ ಕ್ಷೇತ್ರ, ಮಾರ್ಕೆಟಿಂಗ್ ಮ್ಯಾನೇಜ್ಮೆಂಟ್, ಫಾರ್ಮಸಿಟಿಕಲ್ ಸೇರಿದಂತೆ ಇನ್ನು ಅನೇಕ ಕ್ಷೇತ್ರದಲ್ಲಿ ಉದ್ಯೋಗ ಅವಕಾಶ ನೀಡುವ ವಿವಿಧ ಕಂಪನಿಗಳು ಸೇರಿವೆ. ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸುವಂತೆ ಕಾಲೇಜುಗಳಿಗೆ ಪತ್ರ ವ್ಯವಹಾರ ಮಾಡಿದ್ದು ಪ್ಲೇಸ್ಮೆಂಟ್ ಆಫೀಸರ್ಗಳ ಭೇಟಿ ಮಾಡಲಾಗಿದೆ ಎಂದು ತಿಳಿಸಿದರು.
ಸಾಮಾಜಿಕ ಜಾಲತಾಣದಲ್ಲಿ, ಪೋಸ್ಟರ್ಗಳು, ಜಿಂಗಲ್ಸ್ ಮತ್ತು ಸ್ವಚ್ಛ ಭಾರತ್ ವಾಹನಗಳ ಮೂಲಕ ವ್ಯಾಪಕ ಪ್ರಚಾರ ಮಾಡಲು ಕೈಗೊಳ್ಳಬೇಕು, ಸುಮಾರು 4,000 ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಸಾಧ್ಯತೆ ಇದೆ, ಆದುದರಿಂದ ಸ್ವಚ್ಛತೆಗೆ ಹೆಚ್ಚು ಒತ್ತು ನೀಡಬೇಕು,
ವಿದ್ಯಾರ್ಥಿಗಳಿಗೆ ಲಘು ಉಪಹಾರ, ನೀರು, ಪ್ರಾಥಮಿಕ ಆರೋಗ್ಯ ಕೇಂದ್ರದ ಆಂಬುಲೆನ್ಸ್ ವ್ಯವಸ್ಥೆ, ವಿಶೇಷ ಬಸ್ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.
ಸುಮಾರು 1,200 ಅಭ್ಯರ್ಥಿಗಳು ಈಗಾಗಲೇ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಗೆ ಸಚಿವರು, ಗಣ್ಯರನ್ನು ಆಹ್ವಾನಿಸಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಬೃಹತ್ ಉದ್ಯೋಗ ಮೇಳದ ಪೋಸ್ಟರ್ ಬಿಡುಗಡೆ ಮಾಡಲಾಯಿತು.
ಸಭೆಯಲ್ಲಿ ಸಿಇಒ ಗಿತ್ತೆ ಮಾಧವ ವಿಠಲ್ ರಾವ್, ಯೋಜನಾ ನಿರ್ದೇಶಕ ಮಹಾಂತೇಶ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ5 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ7 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ5 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ2 days agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
-
ದಿನದ ಸುದ್ದಿ15 hours agoಯಶಸ್ವಿ ಬೃಹತ್ ಉದ್ಯೋಗ ಮೇಳಕ್ಕೆ ಕ್ರಮವಹಿಸಿ: ಡಿಸಿ ಗಂಗಾಧರ್ ಸ್ವಾಮಿ

