ದಿನದ ಸುದ್ದಿ
ದಾವಣಗೆರೆ | ಜಿಲ್ಲಾ ಉಸ್ತುವಾರಿ ಸಚಿವರಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ : ಕೋವಿಡ್ ನಿಯಂತ್ರಣ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಜಾರಿಗೆ ಸಚಿವರ ಸೂಚನೆ
ಸುದ್ದಿದಿನ,ದಾವಣಗೆರೆ : ಸರ್ಕಾರ ಹೊರಡಿಸಿರುವ ಕೋವಿಡ್ ನಿಯಂತ್ರಣದ ಹೊಸ ಮಾರ್ಗಸೂಚಿಗಳನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಜೊತೆಗೆ ಕೋವಿಡ್ ಔಷಧಿಗಳು, ಆಕ್ಸಿಜನ್ ಮತ್ತು ಲಸಿಕೆ ಸಮರ್ಪಕ ನಿರ್ವಹಣೆಯೊಂದಿಗೆ ರೈತರು, ಕೈಗಾರಿಕೆಗಳು ಮತ್ತು ಕಟ್ಟಡ ನಿರ್ಮಾಣ ಚಟುವಟಿಕೆಗಳಿಗೆ ತೊಂದರೆ ಆಗದಂತೆ ಕ್ರಮ ವಹಿಸಬೇಕೆಂದು ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು.
ಬುಧವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತಗಳೊಂದಿಗೆ ಸಭೆ ನಡೆಸಿ, ಕೋವಿಡ್ ನಿಯಂತ್ರಣದ ಹೊಸ ಮಾರ್ಗಸೂಚಿಗಳು ಮತ್ತು ದಾವಣಗೆರೆ ನಗರ ಹಾಗೂ ತಾಲ್ಲೂಕುಗಳಲ್ಲಿನ ಕೋವಿಡ್ ಹಿನ್ನೆಲೆಯ ವಾಸ್ತವಿಕ ಸ್ಥಿತಿಗತಿಗಳ ಬಗ್ಗೆ ಸವಿವರವಾಗಿ ಡಿಸಿ, ಎಸ್ಪಿ, ಡಿಹೆಚ್ಓ, ತಾಲ್ಲೂಕುಗಳ ತಹಶೀಲ್ದಾರರು ಮತ್ತು ಆರೋಗ್ಯಾಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದರು.
ಜಿಲ್ಲೆಯಲ್ಲಿ ಕೋವಿಡ್ ಲಸಿಕೆ, ರೆಮಿಡಿಸಿವರ್ ಸೇರಿದಂತೆ ಇತರೆ ಔಷಧಿಗಳು ಮತ್ತು ಆಕ್ಸಿಜನ್, ಬೆಡ್ ಇನ್ನಾವುದೇ ರೀತಿಯ ಕೊರತೆಗಳು ಕಂಡುಬಂದಲ್ಲಿ ತಕ್ಷಣ ನನ್ನ ಗಮನಕ್ಕೆ ತರಬೇಕು. ತಾವು ಮುಖ್ಯಮಂತ್ರಿಗಳು, ಆರೋಗ್ಯ ಮಂತ್ರಿಯವರೊಂದಿಗೆ ಪ್ರತಿ ದಿನದ ವರದಿ ನೀಡುತ್ತಿದ್ದು, ಈ ಬಗ್ಗೆಯೂ ಸಮಾಲೋಚಿಸಿ ಶೀಘ್ರದಲ್ಲೇ ಸಮರ್ಪಕ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು.
ಇದನ್ನೂ ಓದಿ | ದಾವಣಗೆರೆ | ಶವ ಸಾಗಿಸಲು ಉಚಿತ ವಾಹನಗಳ ವ್ಯವಸ್ಥೆ ; ಬೆಡ್ ಮತ್ತು ಆಕ್ಸಿಜನ್ ವಿವರ : ಜಿಲ್ಲಾಧಿಕಾರಿ
ಜಿಲ್ಲೆಯ ಹೊರಭಾಗದಿಂದ ಬಂದವರಿಗೆ ಕೋವಿಡ್ ಲಕ್ಷಣವಿದ್ದಲ್ಲಿ ತಕ್ಷಣ ಪರೀಕ್ಷೆ ಮಾಡಿ ಫಲಿತಾಂಶ ಬರುವವರೆಗೆ ಅವರನ್ನು ಹೋಂ ಕ್ವಾರಂಟೈನ್ನಲ್ಲಿ ಇರುವಂತೆ ನೋಡಿಕೊಳ್ಳಬೇಕಿರುವುದು ಆರೋಗ್ಯ ಇಲಾಖೆ ಜವಾಬ್ದಾರಿಯಾಗಿದೆ. ಹೊಸ ಮಾರ್ಗಸೂಚಿಗಳ ಜಾರಿಗೆ ಪೊಲೀಸ್ ಇಲಾಖೆಗೆ ಅನುಕೂಲವಾಗುವಂತೆ ಹೆಚ್ಚುವರಿಯಾಗಿ ಗೃಹರಕ್ಷಕದಳ ಸಿಬ್ಬಂದಿಗಳ ಸೇವೆಯನ್ನು ಬಳಸಿಕೊಳ್ಳಲು ಅವಕಾಶ ನೀಡಲಾಗಿದ್ದು ಎಸ್ಪಿ ಯವರು ಇವರನ್ನು ಬಳಸಿಕೊಂಡು ಕಠಿಣ ನಿಯಮಗಳು ಪಾಲನೆಯಾಗುವಂತೆ ನೋಡಿಕೊಳ್ಳಬೇಕು. ಜಿಲ್ಲೆಯ ಎಲ್ಲಾ ತಾಲ್ಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಆಂಬುಲೆನ್ಸ್ ಇರುವಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರತಿಕ್ರಿಯಿಸಿ ಕೋವಿಡ್ ರೋಗಿಗಳಿಗೆ ರೆಮಿಡಿಸಿವರ್ ಒಂದೇ ಪರಿಣಾಮಕಾರಿ ಚಿಕಿತ್ಸೆ ಅಲ್ಲ. ಇತರೇ ಲಸಿಕೆಗಳು ಮತ್ತು ಆಂಟಿಬಯಾಟಿಕ್ಗಳ ಬಗ್ಗೆ ತಜ್ಞರೊಂದಿಗೆ ಚರ್ಚಿಸಿ ಇಂಡೆಂಟ್ ಹಾಕಲಾಗಿದೆ. ಆ ಔಷಧಿಗಳನ್ನು ಜಿಲ್ಲಾಸ್ಪತ್ರೆಗೆ ಶೀಘ್ರವಾಗಿ ಸರಬರಾಜು ಮಾಡಲು ಕ್ರಮ ವಹಿಸಬೇಕೆಂದು ಸಚಿವರಲ್ಲಿ ಮನವಿ ಮಾಡಿದರು.
ಹಾಗೂ ಜಿಲ್ಲೆಯಲ್ಲಿ ಜನರು ಸ್ವಯಂಪ್ರೇರಿತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಲಸಿಕೆ ಪಡೆಯಲು ಬರುತ್ತಿದ್ದು, ಪ್ರಸ್ತುತ ದಿನಕ್ಕೆ 13 ಸಾವಿರ ಜನರಿಗೆ ನೀಡುವ ಗುರಿ ಹೊಂದಲಾಗಿದೆ. ಮುಂದಿನ ದಿನಗಳಲ್ಲಿ 20 ಸಾವಿರದವರೆಗೆ ಲಸಿಕೆ ನೀಡಲು ಅಗತ್ಯವಾದ ಲಸಿಕೆಗಳ ಸರಬರಾಜು ಮಾಡಬೇಕೆಂದು ಸಚಿವರಲ್ಲಿ ಕೋರಿದರು.
ಡಿಹೆಚ್ಓ ಡಾ.ನಾಗರಾಜ ಮಾತನಾಡಿ, 45 ವರ್ಷ ಮೇಲ್ಪಟ್ಟವರಿಗೆ ಇಲ್ಲಿಯವರೆಗೆ 1,55,204 ಜನರಿಗೆ ಲಸಿಕೆ ನೀಡಲಾಗಿದೆ. 1,86,667 ಆರೋಗ್ಯ ಮತ್ತು ಫ್ರಂಟ್ಲೈನ್ ಉದ್ಯೋಗಿಗಳಿಗೆ ಲಸಿಕೆ ನೀಡಲಾಗಿದೆ. ಇಂದಿಗೆ ಸಾಕಾಗುವಷ್ಟು ರೆಮಿಡಿಸಿವರ್ ಲಸಿಕೆ ಜಿಲ್ಲಾಸ್ಪತ್ರೆಯಲ್ಲಿ ಲಭ್ಯವಿದ್ದು, ಇಂದು ಎರಡು ಕಂಪೆನಿಗಳಿಂದ ರೆಮಿಡಿಸಿವರ್ ಲಸಿಕೆ ಜಿಲ್ಲಾಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಪೂರೈಕೆಯಾಗಲಿದೆ ಎಂದರು.
ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ.ಜಯಪ್ರಕಾಶ್ ಮಾತನಾಡಿ, ಸಿ.ಜಿ ಆಸ್ಪತ್ರೆಯಲ್ಲಿ ಒಟ್ಟು 930 ಬೆಡ್ ಸಾಮಥ್ರ್ಯ ಇದ್ದು, ಇದರಲ್ಲಿ 300 ಬೆಡ್ಗಳನ್ನು ಕೋವಿಡ್ ರೋಗಿಗಳಿಗೆ ಮೀಸಲಿರಿಸಿದ್ದು, ಈ ಪೈಕಿ 30 ಆಕ್ಸಿಜನ್ ಬೆಡ್ಗಳಿವೆ. ಪ್ರಸ್ತುತ ಆಕ್ಸಿಜನ್ಗೆ ಕೊರತೆ ಇಲ್ಲ. 270 ಆಕ್ಸಿಜನ್ ಸಿಲಿಂಡರ್ಗಳು ಮತ್ತು 80 ವಯಲ್ ರೆಮಿಡಿಸಿವರ್ ಲಭ್ಯತೆ ಇದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರ ಹನುಮಂತರಾಯ ಮಾತನಾಡಿ, ಜಿಲ್ಲೆಯಲ್ಲಿ ಕೊವಿಡ್ ಹೊಸ ಮಾರ್ಗಸೂಚಿಗಳನ್ನು ಪಾಲಿಸಲು ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ. ಕಳೆದ ಒಂದು ವಾರದಲ್ಲಿ 2335 ಮಾಸ್ಕ್ ಪ್ರಕರಣ. ಲಾಕ್ಡೌನ್ ಉಲ್ಲಂಘನೆಯ 15 ಪ್ರಕರಣವನ್ನು ಎಪಿಡೆಮಿಕ್ ಕಾಯ್ದೆ ಅಡಿ ದಾಖಲಿಸಲಾಗಿದೆ. ಇದರಲ್ಲಿ ರೆಮಿಡಿಸಿವರ್ ಲಸಿಕೆ ಅಕ್ರಮ ಸಂಗ್ರಹ ಮತ್ತು ಮಾರಾಟದ ಕುರಿತು 02 ಪ್ರಕರಣ ದಾಖಲಾಗಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸಚಿವರು ಪ್ರತಿಕ್ರಿಯಿಸಿ, ಜಿಲ್ಲೆಯಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ಯಾವುದೇ ತೊಂದರೆ ಆಗದಂತೆ ಸ್ಥಳೀಯವಾಗಿ ಕ್ರಮ ಜರುಗಿಸಬೇಕು. ಅವಶ್ಯಕತೆ ಇರುವವರಿಗೆ ಗ್ರೀನ್ ಕಾರ್ಡ್ ನೀಡಬೇಕು. ತಾಲ್ಲೂಕುಗಳಲ್ಲಿ ನೋಡಲ್ ಅಧಿಕಾರಿಗಳಾಗಿರುವ ತಹಶೀಲ್ದಾರರು ತಾಲ್ಲೂಕಿನಾದ್ಯಂತ ಸಂಚರಿಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದರು.
ಹಾಗೂ ಜಿಲ್ಲೆಯ ಪ್ರವೇಶ ಮತ್ತು ಟೋಲ್, ಹೊರಹೋಗುವ ದಾರಿಗಳಲ್ಲಿ ಚೆಕ್ಪೋಸ್ಟ್ ಸ್ಥಾಪಿಸುವಂತೆ ಹಿಂದಿನ ಸಭೆಯಲ್ಲಿ ತಿಳಿಸಿದ್ದು ಈ ಬಗ್ಗೆ ಕೇಳಿದಾಗ ಎಸ್ಪಿ ಯವರು, ಹೆಬ್ಬಾಳ ಟೋಲ್ ಮತ್ತು ದಾವಣಗೆರೆ ಪ್ರವೇಶ, ನ್ಯಾಮತಿ ಹೊನ್ನಾಳಿಯಲ್ಲಿ ಚೆಕ್ಪೋಸ್ಟ್ ಸ್ಥಾಪಿಸಿ ಕ್ರಮ ವಹಿಸಲಾಗುತ್ತಿದೆ ಎಂದರು.
ದಾವಣಗೆರೆ, ಹೊನ್ನಾಳಿ, ಚನ್ನಗಿರಿ, ಹರಿಹರ, ಜಗಳೂರು ತಾಲ್ಲೂಕುಗಳ ತಹಶೀಲ್ದಾರರೊಂದಿಗೆ ಸಚಿವರು ಮಾತನಾಡಿ ತಾಲ್ಲೂಕುಗಳಲ್ಲಿ ಕೋವಿಡ್ ವಸ್ತುಸ್ಥಿತಿ ಕುರಿತು ಮಾಹಿತಿ ಪಡೆದುಕೊಂಡು ತಾಲ್ಲೂಕುಗಳಲ್ಲಿ ರೈತರ ಚಟುವಟಿಕೆ ಮತ್ತು ಹರಿಹರದಂತಹ ತಾಲ್ಲೂಕಿನಲ್ಲಿ ಕೈಗಾರಿಕೆ ಚಟುವಟಿಕೆ ಇತರೆ ಕಟ್ಟಡ ಕಾಮಗಾರಿಗಳಿಗೆ ತೊಂದರೆ ಆಗದಂತೆ ತಹಶೀಲ್ದಾರರು ಕ್ರಮ ಕೈಗೊಳ್ಳಬೇಕು.
ಜೊತೆಗೆ ತಾಲ್ಲೂಕು ಟಾಸ್ಕ್ಫೋರ್ಸ್, ಗ್ರಾ.ಪಂ ಹಾಗೂ ಬೂತ್ ಮಟ್ಟದಲ್ಲಿ ಟಾಸ್ಕ್ಫೋರ್ಸ್ ಸಮಿತಿಗಳು ಸಕ್ರಿಯವಾಗಿ ಕೋವಿಡ್ ನಿರ್ವಹಣೆಯಲ್ಲಿ ಪಾಲ್ಗೊಳ್ಳಬೇಕು. ಹಾಗೂ ಪಿಡಿಓ, ಆಶಾ, ಅಂಗನವಾಡಿ ಸೇರಿದಂತೆ ಹಿಂದೆ ಸಕ್ರಿಯವಾಗಿದ್ದ ಎಲ್ಲ ಸಿಬ್ಬಂದಿಗಳನ್ನೊಳಗೊಂಡು ಕಾರ್ಯ ನಿರ್ವಹಿಸಬೇಕೆಂದು ಸೂಚನೆ ನೀಡಿದರು.
ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ ಮಾತನಾಡಿ, ನಗರವನ್ನು ಮೂರು ವಲಯಗಳನ್ನಾಗಿ ವಿಂಗಡಿಸಿ ಮೂರು ತಂಡಗಳನ್ನು ರಚಿಸಿ ಕೋವಿಡ್ ನಿಯಮ ಉಲ್ಲಂಘನೆ ಬಗ್ಗೆ ಕ್ರಮ ವಹಿಸಲಾಗುತ್ತಿದೆ. 45 ವಾರ್ಡುಗಳಲ್ಲಿ ತಳ್ಳುಗಾಡಿಗಳ ಮೂಲಕ ತರಕಾರಿ ವ್ಯಾಪಾರಕ್ಕೆ ಅನುವು ಮಾಡಿಕೊಡಲಾಗಿದೆ. ಇದುವರೆಗೆ ನಿಯಮ ಉಲ್ಲಂಘಿಸಿದ ಬಟ್ಟೆ ಸೇರಿದಂತೆ ಇತರೆ ಅಂಗಡಿಗಳಿಗೆ ರೂ.1,84,800 ದಂಡ ವಿಧಿಸಲಾಗಿದ್ದು, ಮಾಸ್ಕ್ ಧರಿಸದೇ ಇರುವವರಿಂದ ರೂ.67,350 ದಂಡ ಸಂಗ್ರಹಿಸಲಾಗಿದೆ ಎಂದರು.
ಸಚಿವರು ಮಾತನಾಡಿ, ಇದೊಂದು ಸಂದಿಗ್ಧ ಪರಿಸ್ಥಿತಿಯಾಗಿದ್ದು, ಅಧಿಕಾರಿಗಳು ಯಾವುದೇ ಮುಲಾಜಿಗೆ ಗುರಿಯಾಗದೇ ಎಚ್ಚರಿಕೆಯಿಂದ ಕೋವಿಡ್ ನಿರ್ವಹಣೆ ಕೆಲಸ ಮಾಡಬೇಕು. ಹಾಗೂ ರೋಗಿಗಳು, ಮತ್ತಾರಿಂದಲೂ ದೂರುಗಳು ಬಾರದಂತೆ ಅತ್ಯುತ್ತಮವಾಗಿ ಕೆಲಸ ನಿರ್ವಹಿಸಿಕೊಂಡು ಹೋಗಬೇಕೆಂದು ಸೂಚನೆ ನೀಡಿದರು.
ಸಭೆಯಲ್ಲಿ ಎಡಿಸಿ ಪೂಜಾರ ವೀರಮಲ್ಲಪ್ಪ, ಎಸಿ ಮಮತಾ ಹೊಸಗೌಡರ್, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ, ಎಸ್ಎಲ್ಓಗಳಾದ ರೇಷ್ಮಾ ಹಾನಗಲ್, ಸರೋಜ, ತಹಶೀಲ್ದಾರ್ ಗಿರೀಶ್, ಆರ್ಸಿಹೆಚ್ಓ ಡಾ.ಮೀನಾಕ್ಷಿ, ಡಾ. ನಟರಾಜ್, ಡಾ.ಗಂಗಾಧರ್, ಡಾ.ರೇಣುಕಾರಾಧ್ಯ, ಡಾ.ಯತೀಶ್, ಟಿಹೆಚ್ಓ ಡಾ.ವೆಂಕಟೇಶ್, ಇತರೆ ಅಧಿಕಾರಿಗಳು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ
ಸುದ್ದಿದಿನ,ಚನ್ನಗಿರಿ: ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯು ಸೋಮೌಅರ ನವಿಲೇಹಾಳು ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಭೇಟಿಯಾಗಿ ಗ್ರಾಮಸಭೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸುವಂತೆ ಮನವಿ ಪತ್ರ ಸಲ್ಲಿಸಲಾಯಿತು.
ಗ್ರಾಮಸಭೆ ಎಂಬುದು ಗ್ರಾಮಸ್ಥರ ಸಮಸ್ಯೆಗಳನ್ನು ನೇರವಾಗಿ ಚರ್ಚಿಸಿ, ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸುವ ಪ್ರಮುಖ ವೇದಿಕೆಯಾಗಿರುವುದರಿಂದ, ಗ್ರಾಮಸಭೆಯ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು PDO ಅವರಿಗೆ ಮನವಿ ಮಾಡಲಾಯಿತು.
ಅದರಂತೆ ಗ್ರಾಮಸಭೆಯ ದಿನಾಂಕ, ಸಮಯ ಹಾಗೂ ಸ್ಥಳದ ಮಾಹಿತಿಯನ್ನು ಟಾಂಟಾಂ/ಧ್ವನಿವರ್ಧಕದ ಮೂಲಕ ಗ್ರಾಮದಲ್ಲಿ ವ್ಯಾಪಕವಾಗಿ ಪ್ರಚಾರ ಮಾಡುವುದರ ಜೊತೆಗೆ, ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅರ್ಹ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸುವಂತೆ ತಿಳಿಸಲಾಯಿತು.
ಗ್ರಾಮದಲ್ಲಿಯೇ ಉದ್ಯೋಗ ಸೃಷ್ಟಿಗೆ ಒತ್ತು
ಇದೇ ಸಂದರ್ಭದಲ್ಲಿ ಮನರೇಗಾ (MGNREGA) ಯೋಜನೆಯಡಿ ಗ್ರಾಮದ ಅರ್ಹ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವಂತೆ ಮನವಿ ಮಾಡಲಾಯಿತು.
ಗ್ರಾಮಸ್ಥರು ಉದ್ಯೋಗಕ್ಕಾಗಿ ಅನಿವಾರ್ಯವಾಗಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ, ಸರ್ಕಾರದ ಉದ್ಯೋಗ ಖಾತರಿ ಯೋಜನೆಯಡಿ ಲಭ್ಯವಿರುವ ಕೆಲಸಗಳನ್ನು ಸಮರ್ಪಕವಾಗಿ ಗುರುತಿಸಿ, ಅರ್ಹರಿಗೆ ನಿಯಮಾನುಸಾರ ಉದ್ಯೋಗ ಒದಗಿಸಬೇಕು ಎಂದು ತಿಳಿಸಲಾಯಿತು.
ಪ್ರಸ್ತುತ ಬತ್ತದ ನಾಟಿ ಕಾರ್ಯಕ್ಕೆ ಅಗತ್ಯವಿರುವ ನೀರಿನ ಸಮಸ್ಯೆಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೃಷಿ ಕೆಲಸಗಳು ಲಭ್ಯವಿಲ್ಲದ ಅವಧಿಯಲ್ಲಿ ಗ್ರಾಮಸ್ಥರಿಗೆ ಮನರೇಗಾ ಸೇರಿದಂತೆ ಇತರೆ ಸರ್ಕಾರಿ ಯೋಜನೆಗಳ ಮೂಲಕ ಉದ್ಯೋಗ ಒದಗಿಸಿ, ಗ್ರಾಮದಲ್ಲಿಯೇ ಆದಾಯದ ಅವಕಾಶಗಳನ್ನು ಸೃಷ್ಟಿಸುವುದು ಅಗತ್ಯವಾಗಿದೆ ಎಂದು ಮನವಿ ಮಾಡಲಾಯಿತು.
ಗ್ರಾಮದಲ್ಲಿಯೇ ಉದ್ಯೋಗ ದೊರೆತರೆ ಗ್ರಾಮಸ್ಥರ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ, ಗುಳೆ ಹೋಗುವುದನ್ನು ತಡೆಯಲು ಹಾಗೂ ಗ್ರಾಮದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು PDO ಅವರ ಗಮನಕ್ಕೆ ತರಲಾಯಿತು.
ಇತರೆ ಗ್ರಾಮಾಭಿವೃದ್ಧಿ ವಿಚಾರಗಳ ಚರ್ಚೆ
ಇದರ ಜೊತೆಗೆ ನವಿಲೇಹಾಳ ಗ್ರಾಮದ ವಿವಿಧ ಅಭಿವೃದ್ಧಿ ಸಮಸ್ಯೆಗಳು, ಸಾರ್ವಜನಿಕರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳು, ಉದ್ಯೋಗಾವಕಾಶಗಳು, ಕೃಷಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು PDO ಅವರೊಂದಿಗೆ ಚರ್ಚಿಸಲಾಯಿತು.
ಗ್ರಾಮಸ್ಥರಿಗೆ ಸರ್ಕಾರದ ಯೋಜನೆಗಳ ಪ್ರಯೋಜನಗಳು ಸಮರ್ಪಕವಾಗಿ ತಲುಪುವಂತೆ ಪಾರದರ್ಶಕವಾಗಿ ಹಾಗೂ ನಿಯಮಾನುಸಾರ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಲಾಯಿತು.
ಗ್ರಾಮಸಭೆಯಲ್ಲಿ ಸಾರ್ವಜನಿಕರ ಹೆಚ್ಚಿನ ಭಾಗವಹಿಸುವಿಕೆ, ಸ್ಥಳೀಯ ಉದ್ಯೋಗ ಸೃಷ್ಟಿ ಹಾಗೂ ಗ್ರಾಮಾಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಮೂಲಕ ನವಿಲೇಹಾಳ ಗ್ರಾಮವನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.
“ಗ್ರಾಮದ ಅಭಿವೃದ್ಧಿ ಕೇವಲ ಸರ್ಕಾರದ ಜವಾಬ್ದಾರಿಯಲ್ಲ; ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಒಗ್ಗೂಡಿ ಕಾರ್ಯನಿರ್ವಹಿಸಿದಾಗ ಮಾತ್ರ ಸಮಗ್ರ ಗ್ರಾಮಾಭಿವೃದ್ಧಿ ಸಾಧ್ಯ.”
ಗ್ರಾಮದ ಜನರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ನವಿಲೇಹಾಳ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ (ರಿ.) ನಿರಂತರವಾಗಿ ಜನಪರವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ದಾವಣಗೆರೆ ಜಿಲ್ಲಾಧ್ಯಕ್ಷರಾದ ಜಾಫರ್ ರವರು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

ದಿನದ ಸುದ್ದಿ
ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.
ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.
ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.
ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.
“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.
ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.
ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.
ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


