ದಿನದ ಸುದ್ದಿ
ದಾವಣಗೆರೆ | ಜಿಲ್ಲಾ ಉಸ್ತುವಾರಿ ಸಚಿವರಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ : ಕೋವಿಡ್ ನಿಯಂತ್ರಣ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಜಾರಿಗೆ ಸಚಿವರ ಸೂಚನೆ
ಸುದ್ದಿದಿನ,ದಾವಣಗೆರೆ : ಸರ್ಕಾರ ಹೊರಡಿಸಿರುವ ಕೋವಿಡ್ ನಿಯಂತ್ರಣದ ಹೊಸ ಮಾರ್ಗಸೂಚಿಗಳನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಜೊತೆಗೆ ಕೋವಿಡ್ ಔಷಧಿಗಳು, ಆಕ್ಸಿಜನ್ ಮತ್ತು ಲಸಿಕೆ ಸಮರ್ಪಕ ನಿರ್ವಹಣೆಯೊಂದಿಗೆ ರೈತರು, ಕೈಗಾರಿಕೆಗಳು ಮತ್ತು ಕಟ್ಟಡ ನಿರ್ಮಾಣ ಚಟುವಟಿಕೆಗಳಿಗೆ ತೊಂದರೆ ಆಗದಂತೆ ಕ್ರಮ ವಹಿಸಬೇಕೆಂದು ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು.
ಬುಧವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತಗಳೊಂದಿಗೆ ಸಭೆ ನಡೆಸಿ, ಕೋವಿಡ್ ನಿಯಂತ್ರಣದ ಹೊಸ ಮಾರ್ಗಸೂಚಿಗಳು ಮತ್ತು ದಾವಣಗೆರೆ ನಗರ ಹಾಗೂ ತಾಲ್ಲೂಕುಗಳಲ್ಲಿನ ಕೋವಿಡ್ ಹಿನ್ನೆಲೆಯ ವಾಸ್ತವಿಕ ಸ್ಥಿತಿಗತಿಗಳ ಬಗ್ಗೆ ಸವಿವರವಾಗಿ ಡಿಸಿ, ಎಸ್ಪಿ, ಡಿಹೆಚ್ಓ, ತಾಲ್ಲೂಕುಗಳ ತಹಶೀಲ್ದಾರರು ಮತ್ತು ಆರೋಗ್ಯಾಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದರು.
ಜಿಲ್ಲೆಯಲ್ಲಿ ಕೋವಿಡ್ ಲಸಿಕೆ, ರೆಮಿಡಿಸಿವರ್ ಸೇರಿದಂತೆ ಇತರೆ ಔಷಧಿಗಳು ಮತ್ತು ಆಕ್ಸಿಜನ್, ಬೆಡ್ ಇನ್ನಾವುದೇ ರೀತಿಯ ಕೊರತೆಗಳು ಕಂಡುಬಂದಲ್ಲಿ ತಕ್ಷಣ ನನ್ನ ಗಮನಕ್ಕೆ ತರಬೇಕು. ತಾವು ಮುಖ್ಯಮಂತ್ರಿಗಳು, ಆರೋಗ್ಯ ಮಂತ್ರಿಯವರೊಂದಿಗೆ ಪ್ರತಿ ದಿನದ ವರದಿ ನೀಡುತ್ತಿದ್ದು, ಈ ಬಗ್ಗೆಯೂ ಸಮಾಲೋಚಿಸಿ ಶೀಘ್ರದಲ್ಲೇ ಸಮರ್ಪಕ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು.
ಇದನ್ನೂ ಓದಿ | ದಾವಣಗೆರೆ | ಶವ ಸಾಗಿಸಲು ಉಚಿತ ವಾಹನಗಳ ವ್ಯವಸ್ಥೆ ; ಬೆಡ್ ಮತ್ತು ಆಕ್ಸಿಜನ್ ವಿವರ : ಜಿಲ್ಲಾಧಿಕಾರಿ
ಜಿಲ್ಲೆಯ ಹೊರಭಾಗದಿಂದ ಬಂದವರಿಗೆ ಕೋವಿಡ್ ಲಕ್ಷಣವಿದ್ದಲ್ಲಿ ತಕ್ಷಣ ಪರೀಕ್ಷೆ ಮಾಡಿ ಫಲಿತಾಂಶ ಬರುವವರೆಗೆ ಅವರನ್ನು ಹೋಂ ಕ್ವಾರಂಟೈನ್ನಲ್ಲಿ ಇರುವಂತೆ ನೋಡಿಕೊಳ್ಳಬೇಕಿರುವುದು ಆರೋಗ್ಯ ಇಲಾಖೆ ಜವಾಬ್ದಾರಿಯಾಗಿದೆ. ಹೊಸ ಮಾರ್ಗಸೂಚಿಗಳ ಜಾರಿಗೆ ಪೊಲೀಸ್ ಇಲಾಖೆಗೆ ಅನುಕೂಲವಾಗುವಂತೆ ಹೆಚ್ಚುವರಿಯಾಗಿ ಗೃಹರಕ್ಷಕದಳ ಸಿಬ್ಬಂದಿಗಳ ಸೇವೆಯನ್ನು ಬಳಸಿಕೊಳ್ಳಲು ಅವಕಾಶ ನೀಡಲಾಗಿದ್ದು ಎಸ್ಪಿ ಯವರು ಇವರನ್ನು ಬಳಸಿಕೊಂಡು ಕಠಿಣ ನಿಯಮಗಳು ಪಾಲನೆಯಾಗುವಂತೆ ನೋಡಿಕೊಳ್ಳಬೇಕು. ಜಿಲ್ಲೆಯ ಎಲ್ಲಾ ತಾಲ್ಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಆಂಬುಲೆನ್ಸ್ ಇರುವಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರತಿಕ್ರಿಯಿಸಿ ಕೋವಿಡ್ ರೋಗಿಗಳಿಗೆ ರೆಮಿಡಿಸಿವರ್ ಒಂದೇ ಪರಿಣಾಮಕಾರಿ ಚಿಕಿತ್ಸೆ ಅಲ್ಲ. ಇತರೇ ಲಸಿಕೆಗಳು ಮತ್ತು ಆಂಟಿಬಯಾಟಿಕ್ಗಳ ಬಗ್ಗೆ ತಜ್ಞರೊಂದಿಗೆ ಚರ್ಚಿಸಿ ಇಂಡೆಂಟ್ ಹಾಕಲಾಗಿದೆ. ಆ ಔಷಧಿಗಳನ್ನು ಜಿಲ್ಲಾಸ್ಪತ್ರೆಗೆ ಶೀಘ್ರವಾಗಿ ಸರಬರಾಜು ಮಾಡಲು ಕ್ರಮ ವಹಿಸಬೇಕೆಂದು ಸಚಿವರಲ್ಲಿ ಮನವಿ ಮಾಡಿದರು.
ಹಾಗೂ ಜಿಲ್ಲೆಯಲ್ಲಿ ಜನರು ಸ್ವಯಂಪ್ರೇರಿತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಲಸಿಕೆ ಪಡೆಯಲು ಬರುತ್ತಿದ್ದು, ಪ್ರಸ್ತುತ ದಿನಕ್ಕೆ 13 ಸಾವಿರ ಜನರಿಗೆ ನೀಡುವ ಗುರಿ ಹೊಂದಲಾಗಿದೆ. ಮುಂದಿನ ದಿನಗಳಲ್ಲಿ 20 ಸಾವಿರದವರೆಗೆ ಲಸಿಕೆ ನೀಡಲು ಅಗತ್ಯವಾದ ಲಸಿಕೆಗಳ ಸರಬರಾಜು ಮಾಡಬೇಕೆಂದು ಸಚಿವರಲ್ಲಿ ಕೋರಿದರು.
ಡಿಹೆಚ್ಓ ಡಾ.ನಾಗರಾಜ ಮಾತನಾಡಿ, 45 ವರ್ಷ ಮೇಲ್ಪಟ್ಟವರಿಗೆ ಇಲ್ಲಿಯವರೆಗೆ 1,55,204 ಜನರಿಗೆ ಲಸಿಕೆ ನೀಡಲಾಗಿದೆ. 1,86,667 ಆರೋಗ್ಯ ಮತ್ತು ಫ್ರಂಟ್ಲೈನ್ ಉದ್ಯೋಗಿಗಳಿಗೆ ಲಸಿಕೆ ನೀಡಲಾಗಿದೆ. ಇಂದಿಗೆ ಸಾಕಾಗುವಷ್ಟು ರೆಮಿಡಿಸಿವರ್ ಲಸಿಕೆ ಜಿಲ್ಲಾಸ್ಪತ್ರೆಯಲ್ಲಿ ಲಭ್ಯವಿದ್ದು, ಇಂದು ಎರಡು ಕಂಪೆನಿಗಳಿಂದ ರೆಮಿಡಿಸಿವರ್ ಲಸಿಕೆ ಜಿಲ್ಲಾಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಪೂರೈಕೆಯಾಗಲಿದೆ ಎಂದರು.
ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ.ಜಯಪ್ರಕಾಶ್ ಮಾತನಾಡಿ, ಸಿ.ಜಿ ಆಸ್ಪತ್ರೆಯಲ್ಲಿ ಒಟ್ಟು 930 ಬೆಡ್ ಸಾಮಥ್ರ್ಯ ಇದ್ದು, ಇದರಲ್ಲಿ 300 ಬೆಡ್ಗಳನ್ನು ಕೋವಿಡ್ ರೋಗಿಗಳಿಗೆ ಮೀಸಲಿರಿಸಿದ್ದು, ಈ ಪೈಕಿ 30 ಆಕ್ಸಿಜನ್ ಬೆಡ್ಗಳಿವೆ. ಪ್ರಸ್ತುತ ಆಕ್ಸಿಜನ್ಗೆ ಕೊರತೆ ಇಲ್ಲ. 270 ಆಕ್ಸಿಜನ್ ಸಿಲಿಂಡರ್ಗಳು ಮತ್ತು 80 ವಯಲ್ ರೆಮಿಡಿಸಿವರ್ ಲಭ್ಯತೆ ಇದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರ ಹನುಮಂತರಾಯ ಮಾತನಾಡಿ, ಜಿಲ್ಲೆಯಲ್ಲಿ ಕೊವಿಡ್ ಹೊಸ ಮಾರ್ಗಸೂಚಿಗಳನ್ನು ಪಾಲಿಸಲು ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ. ಕಳೆದ ಒಂದು ವಾರದಲ್ಲಿ 2335 ಮಾಸ್ಕ್ ಪ್ರಕರಣ. ಲಾಕ್ಡೌನ್ ಉಲ್ಲಂಘನೆಯ 15 ಪ್ರಕರಣವನ್ನು ಎಪಿಡೆಮಿಕ್ ಕಾಯ್ದೆ ಅಡಿ ದಾಖಲಿಸಲಾಗಿದೆ. ಇದರಲ್ಲಿ ರೆಮಿಡಿಸಿವರ್ ಲಸಿಕೆ ಅಕ್ರಮ ಸಂಗ್ರಹ ಮತ್ತು ಮಾರಾಟದ ಕುರಿತು 02 ಪ್ರಕರಣ ದಾಖಲಾಗಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸಚಿವರು ಪ್ರತಿಕ್ರಿಯಿಸಿ, ಜಿಲ್ಲೆಯಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ಯಾವುದೇ ತೊಂದರೆ ಆಗದಂತೆ ಸ್ಥಳೀಯವಾಗಿ ಕ್ರಮ ಜರುಗಿಸಬೇಕು. ಅವಶ್ಯಕತೆ ಇರುವವರಿಗೆ ಗ್ರೀನ್ ಕಾರ್ಡ್ ನೀಡಬೇಕು. ತಾಲ್ಲೂಕುಗಳಲ್ಲಿ ನೋಡಲ್ ಅಧಿಕಾರಿಗಳಾಗಿರುವ ತಹಶೀಲ್ದಾರರು ತಾಲ್ಲೂಕಿನಾದ್ಯಂತ ಸಂಚರಿಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದರು.
ಹಾಗೂ ಜಿಲ್ಲೆಯ ಪ್ರವೇಶ ಮತ್ತು ಟೋಲ್, ಹೊರಹೋಗುವ ದಾರಿಗಳಲ್ಲಿ ಚೆಕ್ಪೋಸ್ಟ್ ಸ್ಥಾಪಿಸುವಂತೆ ಹಿಂದಿನ ಸಭೆಯಲ್ಲಿ ತಿಳಿಸಿದ್ದು ಈ ಬಗ್ಗೆ ಕೇಳಿದಾಗ ಎಸ್ಪಿ ಯವರು, ಹೆಬ್ಬಾಳ ಟೋಲ್ ಮತ್ತು ದಾವಣಗೆರೆ ಪ್ರವೇಶ, ನ್ಯಾಮತಿ ಹೊನ್ನಾಳಿಯಲ್ಲಿ ಚೆಕ್ಪೋಸ್ಟ್ ಸ್ಥಾಪಿಸಿ ಕ್ರಮ ವಹಿಸಲಾಗುತ್ತಿದೆ ಎಂದರು.
ದಾವಣಗೆರೆ, ಹೊನ್ನಾಳಿ, ಚನ್ನಗಿರಿ, ಹರಿಹರ, ಜಗಳೂರು ತಾಲ್ಲೂಕುಗಳ ತಹಶೀಲ್ದಾರರೊಂದಿಗೆ ಸಚಿವರು ಮಾತನಾಡಿ ತಾಲ್ಲೂಕುಗಳಲ್ಲಿ ಕೋವಿಡ್ ವಸ್ತುಸ್ಥಿತಿ ಕುರಿತು ಮಾಹಿತಿ ಪಡೆದುಕೊಂಡು ತಾಲ್ಲೂಕುಗಳಲ್ಲಿ ರೈತರ ಚಟುವಟಿಕೆ ಮತ್ತು ಹರಿಹರದಂತಹ ತಾಲ್ಲೂಕಿನಲ್ಲಿ ಕೈಗಾರಿಕೆ ಚಟುವಟಿಕೆ ಇತರೆ ಕಟ್ಟಡ ಕಾಮಗಾರಿಗಳಿಗೆ ತೊಂದರೆ ಆಗದಂತೆ ತಹಶೀಲ್ದಾರರು ಕ್ರಮ ಕೈಗೊಳ್ಳಬೇಕು.
ಜೊತೆಗೆ ತಾಲ್ಲೂಕು ಟಾಸ್ಕ್ಫೋರ್ಸ್, ಗ್ರಾ.ಪಂ ಹಾಗೂ ಬೂತ್ ಮಟ್ಟದಲ್ಲಿ ಟಾಸ್ಕ್ಫೋರ್ಸ್ ಸಮಿತಿಗಳು ಸಕ್ರಿಯವಾಗಿ ಕೋವಿಡ್ ನಿರ್ವಹಣೆಯಲ್ಲಿ ಪಾಲ್ಗೊಳ್ಳಬೇಕು. ಹಾಗೂ ಪಿಡಿಓ, ಆಶಾ, ಅಂಗನವಾಡಿ ಸೇರಿದಂತೆ ಹಿಂದೆ ಸಕ್ರಿಯವಾಗಿದ್ದ ಎಲ್ಲ ಸಿಬ್ಬಂದಿಗಳನ್ನೊಳಗೊಂಡು ಕಾರ್ಯ ನಿರ್ವಹಿಸಬೇಕೆಂದು ಸೂಚನೆ ನೀಡಿದರು.
ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ ಮಾತನಾಡಿ, ನಗರವನ್ನು ಮೂರು ವಲಯಗಳನ್ನಾಗಿ ವಿಂಗಡಿಸಿ ಮೂರು ತಂಡಗಳನ್ನು ರಚಿಸಿ ಕೋವಿಡ್ ನಿಯಮ ಉಲ್ಲಂಘನೆ ಬಗ್ಗೆ ಕ್ರಮ ವಹಿಸಲಾಗುತ್ತಿದೆ. 45 ವಾರ್ಡುಗಳಲ್ಲಿ ತಳ್ಳುಗಾಡಿಗಳ ಮೂಲಕ ತರಕಾರಿ ವ್ಯಾಪಾರಕ್ಕೆ ಅನುವು ಮಾಡಿಕೊಡಲಾಗಿದೆ. ಇದುವರೆಗೆ ನಿಯಮ ಉಲ್ಲಂಘಿಸಿದ ಬಟ್ಟೆ ಸೇರಿದಂತೆ ಇತರೆ ಅಂಗಡಿಗಳಿಗೆ ರೂ.1,84,800 ದಂಡ ವಿಧಿಸಲಾಗಿದ್ದು, ಮಾಸ್ಕ್ ಧರಿಸದೇ ಇರುವವರಿಂದ ರೂ.67,350 ದಂಡ ಸಂಗ್ರಹಿಸಲಾಗಿದೆ ಎಂದರು.
ಸಚಿವರು ಮಾತನಾಡಿ, ಇದೊಂದು ಸಂದಿಗ್ಧ ಪರಿಸ್ಥಿತಿಯಾಗಿದ್ದು, ಅಧಿಕಾರಿಗಳು ಯಾವುದೇ ಮುಲಾಜಿಗೆ ಗುರಿಯಾಗದೇ ಎಚ್ಚರಿಕೆಯಿಂದ ಕೋವಿಡ್ ನಿರ್ವಹಣೆ ಕೆಲಸ ಮಾಡಬೇಕು. ಹಾಗೂ ರೋಗಿಗಳು, ಮತ್ತಾರಿಂದಲೂ ದೂರುಗಳು ಬಾರದಂತೆ ಅತ್ಯುತ್ತಮವಾಗಿ ಕೆಲಸ ನಿರ್ವಹಿಸಿಕೊಂಡು ಹೋಗಬೇಕೆಂದು ಸೂಚನೆ ನೀಡಿದರು.
ಸಭೆಯಲ್ಲಿ ಎಡಿಸಿ ಪೂಜಾರ ವೀರಮಲ್ಲಪ್ಪ, ಎಸಿ ಮಮತಾ ಹೊಸಗೌಡರ್, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ, ಎಸ್ಎಲ್ಓಗಳಾದ ರೇಷ್ಮಾ ಹಾನಗಲ್, ಸರೋಜ, ತಹಶೀಲ್ದಾರ್ ಗಿರೀಶ್, ಆರ್ಸಿಹೆಚ್ಓ ಡಾ.ಮೀನಾಕ್ಷಿ, ಡಾ. ನಟರಾಜ್, ಡಾ.ಗಂಗಾಧರ್, ಡಾ.ರೇಣುಕಾರಾಧ್ಯ, ಡಾ.ಯತೀಶ್, ಟಿಹೆಚ್ಓ ಡಾ.ವೆಂಕಟೇಶ್, ಇತರೆ ಅಧಿಕಾರಿಗಳು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!
ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.
ನಡೆದಿದ್ದೇನು?
ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.
ಡೆತ್ ನೋಟ್ನಲ್ಲಿತ್ತು ಕೊನೆಯ ಆಸೆ
ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.
ತಮಿಳುನಾಡಿನಲ್ಲಿ ಅಂತ್ಯಕ್ರಿಯೆ
ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.
ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್; ಪ್ರವೇಶಾತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: 2026-27ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿನ ಮೂರು ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಹಾಗೂ ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ 2026 ರ ಜುಲೈ 01ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 23 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 25 ವರ್ಷ ಮೀರಿರಬಾರದು. ಒಟ್ಟು 39 ಅಭ್ಯರ್ಥಿಗಳನ್ನು (ಪುರುಷ ಮತ್ತು ಮಹಿಳಾ) ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500/- ಗಳ ಶಿಷ್ಯವೇತನ ನೀಡಲಾಗುವುದು., ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.
ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಡಿಪ್ಲೋಮಾ ಕೋರ್ಸ್ಗೆ ನೇರ ಪ್ರವೇಶಕ್ಕೆ https://khtigadag.ac.in/
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಳಿಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಕಾಲೇಜು ರಸ್ತೆ, ನಿಟ್ಟುವಳ್ಳಿ, ದಾವಣಗೆರೆ ಅಥವಾ ದೂರವಾಣಿ ಸಂಖ್ಯೆ: 08192-262362 ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಿನದ ಸುದ್ದಿ
ದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
ಸುದ್ದಿದಿನ,ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ದಾವಣಗೆರೆಯ ಭೂಮಿಕಾ ನಗರದ ನಿವಾಸಿಯಾಗಿರುವ 52 ವರ್ಷದ ಸರ್ಕಾರಿ ಕಾಲೇಜಿನ ಉಪನ್ಯಾಸಕ ಹಣ ಕಳೆದುಕೊಂಡಿದ್ದಾರೆ.
ಉಪನ್ಯಾಸಕರು ಮೊದಲಿಗೆ ಟೆಲಿಗ್ರಾಂ ಮೂಲಕ ಲಿಂಕ್ ಕ್ಲಿಕ್ ಮಾಡಿದ್ದಾರೆ. ಅಲ್ಲಿ ವಂಚಕರು ಹೇಳಿದಂತೆ ಹಲವು ಲಿಂಕ್ಗಳನ್ನು ಕ್ಲಿಕ್ ಮಾಡುತ್ತಾ ಹೋಗಿದ್ದು, ಹಂತಹಂತವಾಗಿ ಹಣ ಕಳೆದುಕೊಂಡಿದ್ದಾರೆ.
ಲಾಭದ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಲಾಭ ಹೋಗಲಿ, ಅಸಲೂ ಬಾರದ ಕಾರಣ ಅನುಮಾನಗೊಂಡು ತಾನು ಹಣ ಕಳೆದುಕೊಂಡಿರುವುದು ದೃಢಪಟ್ಟಿದೆ. ನಂತರ ಸೈಬರ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ2 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ6 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ದಿನದ ಸುದ್ದಿ2 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ದಿನದ ಸುದ್ದಿ6 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ಕ್ರೀಡೆ6 days agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
-
ಅಂಕಣ1 day agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ದಿನದ ಸುದ್ದಿ1 day agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ

