ದಿನದ ಸುದ್ದಿ

ದಾವಣಗೆರೆ | ಜಿಲ್ಲಾ ಉಸ್ತುವಾರಿ ಸಚಿವರಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ : ಕೋವಿಡ್ ನಿಯಂತ್ರಣ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಜಾರಿಗೆ ಸಚಿವರ ಸೂಚನೆ

Published

on

ಸುದ್ದಿದಿನ,ದಾವಣಗೆರೆ : ಸರ್ಕಾರ ಹೊರಡಿಸಿರುವ ಕೋವಿಡ್ ನಿಯಂತ್ರಣದ ಹೊಸ ಮಾರ್ಗಸೂಚಿಗಳನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಜೊತೆಗೆ ಕೋವಿಡ್ ಔಷಧಿಗಳು, ಆಕ್ಸಿಜನ್ ಮತ್ತು ಲಸಿಕೆ ಸಮರ್ಪಕ ನಿರ್ವಹಣೆಯೊಂದಿಗೆ ರೈತರು, ಕೈಗಾರಿಕೆಗಳು ಮತ್ತು ಕಟ್ಟಡ ನಿರ್ಮಾಣ ಚಟುವಟಿಕೆಗಳಿಗೆ ತೊಂದರೆ ಆಗದಂತೆ ಕ್ರಮ ವಹಿಸಬೇಕೆಂದು ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು.

ಬುಧವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತಗಳೊಂದಿಗೆ ಸಭೆ ನಡೆಸಿ, ಕೋವಿಡ್ ನಿಯಂತ್ರಣದ ಹೊಸ ಮಾರ್ಗಸೂಚಿಗಳು ಮತ್ತು ದಾವಣಗೆರೆ ನಗರ ಹಾಗೂ ತಾಲ್ಲೂಕುಗಳಲ್ಲಿನ ಕೋವಿಡ್ ಹಿನ್ನೆಲೆಯ ವಾಸ್ತವಿಕ ಸ್ಥಿತಿಗತಿಗಳ ಬಗ್ಗೆ ಸವಿವರವಾಗಿ ಡಿಸಿ, ಎಸ್‍ಪಿ, ಡಿಹೆಚ್‍ಓ, ತಾಲ್ಲೂಕುಗಳ ತಹಶೀಲ್ದಾರರು ಮತ್ತು ಆರೋಗ್ಯಾಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದರು.

ಜಿಲ್ಲೆಯಲ್ಲಿ ಕೋವಿಡ್ ಲಸಿಕೆ, ರೆಮಿಡಿಸಿವರ್ ಸೇರಿದಂತೆ ಇತರೆ ಔಷಧಿಗಳು ಮತ್ತು ಆಕ್ಸಿಜನ್, ಬೆಡ್ ಇನ್ನಾವುದೇ ರೀತಿಯ ಕೊರತೆಗಳು ಕಂಡುಬಂದಲ್ಲಿ ತಕ್ಷಣ ನನ್ನ ಗಮನಕ್ಕೆ ತರಬೇಕು. ತಾವು ಮುಖ್ಯಮಂತ್ರಿಗಳು, ಆರೋಗ್ಯ ಮಂತ್ರಿಯವರೊಂದಿಗೆ ಪ್ರತಿ ದಿನದ ವರದಿ ನೀಡುತ್ತಿದ್ದು, ಈ ಬಗ್ಗೆಯೂ ಸಮಾಲೋಚಿಸಿ ಶೀಘ್ರದಲ್ಲೇ ಸಮರ್ಪಕ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು.

ಇದನ್ನೂ ಓದಿ | ದಾವಣಗೆರೆ | ಶವ ಸಾಗಿಸಲು ಉಚಿತ ವಾಹನಗಳ ವ್ಯವಸ್ಥೆ ; ಬೆಡ್ ಮತ್ತು ಆಕ್ಸಿಜನ್ ವಿವರ : ಜಿಲ್ಲಾಧಿಕಾರಿ

ಜಿಲ್ಲೆಯ ಹೊರಭಾಗದಿಂದ ಬಂದವರಿಗೆ ಕೋವಿಡ್ ಲಕ್ಷಣವಿದ್ದಲ್ಲಿ ತಕ್ಷಣ ಪರೀಕ್ಷೆ ಮಾಡಿ ಫಲಿತಾಂಶ ಬರುವವರೆಗೆ ಅವರನ್ನು ಹೋಂ ಕ್ವಾರಂಟೈನ್‍ನಲ್ಲಿ ಇರುವಂತೆ ನೋಡಿಕೊಳ್ಳಬೇಕಿರುವುದು ಆರೋಗ್ಯ ಇಲಾಖೆ ಜವಾಬ್ದಾರಿಯಾಗಿದೆ. ಹೊಸ ಮಾರ್ಗಸೂಚಿಗಳ ಜಾರಿಗೆ ಪೊಲೀಸ್ ಇಲಾಖೆಗೆ ಅನುಕೂಲವಾಗುವಂತೆ ಹೆಚ್ಚುವರಿಯಾಗಿ ಗೃಹರಕ್ಷಕದಳ ಸಿಬ್ಬಂದಿಗಳ ಸೇವೆಯನ್ನು ಬಳಸಿಕೊಳ್ಳಲು ಅವಕಾಶ ನೀಡಲಾಗಿದ್ದು ಎಸ್‍ಪಿ ಯವರು ಇವರನ್ನು ಬಳಸಿಕೊಂಡು ಕಠಿಣ ನಿಯಮಗಳು ಪಾಲನೆಯಾಗುವಂತೆ ನೋಡಿಕೊಳ್ಳಬೇಕು. ಜಿಲ್ಲೆಯ ಎಲ್ಲಾ ತಾಲ್ಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಆಂಬುಲೆನ್ಸ್ ಇರುವಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರತಿಕ್ರಿಯಿಸಿ ಕೋವಿಡ್ ರೋಗಿಗಳಿಗೆ ರೆಮಿಡಿಸಿವರ್ ಒಂದೇ ಪರಿಣಾಮಕಾರಿ ಚಿಕಿತ್ಸೆ ಅಲ್ಲ. ಇತರೇ ಲಸಿಕೆಗಳು ಮತ್ತು ಆಂಟಿಬಯಾಟಿಕ್‍ಗಳ ಬಗ್ಗೆ ತಜ್ಞರೊಂದಿಗೆ ಚರ್ಚಿಸಿ ಇಂಡೆಂಟ್ ಹಾಕಲಾಗಿದೆ. ಆ ಔಷಧಿಗಳನ್ನು ಜಿಲ್ಲಾಸ್ಪತ್ರೆಗೆ ಶೀಘ್ರವಾಗಿ ಸರಬರಾಜು ಮಾಡಲು ಕ್ರಮ ವಹಿಸಬೇಕೆಂದು ಸಚಿವರಲ್ಲಿ ಮನವಿ ಮಾಡಿದರು.

ಹಾಗೂ ಜಿಲ್ಲೆಯಲ್ಲಿ ಜನರು ಸ್ವಯಂಪ್ರೇರಿತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಲಸಿಕೆ ಪಡೆಯಲು ಬರುತ್ತಿದ್ದು, ಪ್ರಸ್ತುತ ದಿನಕ್ಕೆ 13 ಸಾವಿರ ಜನರಿಗೆ ನೀಡುವ ಗುರಿ ಹೊಂದಲಾಗಿದೆ. ಮುಂದಿನ ದಿನಗಳಲ್ಲಿ 20 ಸಾವಿರದವರೆಗೆ ಲಸಿಕೆ ನೀಡಲು ಅಗತ್ಯವಾದ ಲಸಿಕೆಗಳ ಸರಬರಾಜು ಮಾಡಬೇಕೆಂದು ಸಚಿವರಲ್ಲಿ ಕೋರಿದರು.

ಡಿಹೆಚ್‍ಓ ಡಾ.ನಾಗರಾಜ ಮಾತನಾಡಿ, 45 ವರ್ಷ ಮೇಲ್ಪಟ್ಟವರಿಗೆ ಇಲ್ಲಿಯವರೆಗೆ 1,55,204 ಜನರಿಗೆ ಲಸಿಕೆ ನೀಡಲಾಗಿದೆ. 1,86,667 ಆರೋಗ್ಯ ಮತ್ತು ಫ್ರಂಟ್‍ಲೈನ್ ಉದ್ಯೋಗಿಗಳಿಗೆ ಲಸಿಕೆ ನೀಡಲಾಗಿದೆ. ಇಂದಿಗೆ ಸಾಕಾಗುವಷ್ಟು ರೆಮಿಡಿಸಿವರ್ ಲಸಿಕೆ ಜಿಲ್ಲಾಸ್ಪತ್ರೆಯಲ್ಲಿ ಲಭ್ಯವಿದ್ದು, ಇಂದು ಎರಡು ಕಂಪೆನಿಗಳಿಂದ ರೆಮಿಡಿಸಿವರ್ ಲಸಿಕೆ ಜಿಲ್ಲಾಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಪೂರೈಕೆಯಾಗಲಿದೆ ಎಂದರು.

ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ.ಜಯಪ್ರಕಾಶ್ ಮಾತನಾಡಿ, ಸಿ.ಜಿ ಆಸ್ಪತ್ರೆಯಲ್ಲಿ ಒಟ್ಟು 930 ಬೆಡ್ ಸಾಮಥ್ರ್ಯ ಇದ್ದು, ಇದರಲ್ಲಿ 300 ಬೆಡ್‍ಗಳನ್ನು ಕೋವಿಡ್ ರೋಗಿಗಳಿಗೆ ಮೀಸಲಿರಿಸಿದ್ದು, ಈ ಪೈಕಿ 30 ಆಕ್ಸಿಜನ್ ಬೆಡ್‍ಗಳಿವೆ. ಪ್ರಸ್ತುತ ಆಕ್ಸಿಜನ್‍ಗೆ ಕೊರತೆ ಇಲ್ಲ. 270 ಆಕ್ಸಿಜನ್ ಸಿಲಿಂಡರ್‍ಗಳು ಮತ್ತು 80 ವಯಲ್ ರೆಮಿಡಿಸಿವರ್ ಲಭ್ಯತೆ ಇದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರ ಹನುಮಂತರಾಯ ಮಾತನಾಡಿ, ಜಿಲ್ಲೆಯಲ್ಲಿ ಕೊವಿಡ್ ಹೊಸ ಮಾರ್ಗಸೂಚಿಗಳನ್ನು ಪಾಲಿಸಲು ಕಟ್ಟುನಿಟ್ಟಿನ ಕ್ರಮ ವಹಿಸಲಾಗಿದೆ. ಕಳೆದ ಒಂದು ವಾರದಲ್ಲಿ 2335 ಮಾಸ್ಕ್ ಪ್ರಕರಣ. ಲಾಕ್‍ಡೌನ್ ಉಲ್ಲಂಘನೆಯ 15 ಪ್ರಕರಣವನ್ನು ಎಪಿಡೆಮಿಕ್ ಕಾಯ್ದೆ ಅಡಿ ದಾಖಲಿಸಲಾಗಿದೆ. ಇದರಲ್ಲಿ ರೆಮಿಡಿಸಿವರ್ ಲಸಿಕೆ ಅಕ್ರಮ ಸಂಗ್ರಹ ಮತ್ತು ಮಾರಾಟದ ಕುರಿತು 02 ಪ್ರಕರಣ ದಾಖಲಾಗಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸಚಿವರು ಪ್ರತಿಕ್ರಿಯಿಸಿ, ಜಿಲ್ಲೆಯಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ಯಾವುದೇ ತೊಂದರೆ ಆಗದಂತೆ ಸ್ಥಳೀಯವಾಗಿ ಕ್ರಮ ಜರುಗಿಸಬೇಕು. ಅವಶ್ಯಕತೆ ಇರುವವರಿಗೆ ಗ್ರೀನ್ ಕಾರ್ಡ್ ನೀಡಬೇಕು. ತಾಲ್ಲೂಕುಗಳಲ್ಲಿ ನೋಡಲ್ ಅಧಿಕಾರಿಗಳಾಗಿರುವ ತಹಶೀಲ್ದಾರರು ತಾಲ್ಲೂಕಿನಾದ್ಯಂತ ಸಂಚರಿಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದರು.

ಹಾಗೂ ಜಿಲ್ಲೆಯ ಪ್ರವೇಶ ಮತ್ತು ಟೋಲ್, ಹೊರಹೋಗುವ ದಾರಿಗಳಲ್ಲಿ ಚೆಕ್‍ಪೋಸ್ಟ್ ಸ್ಥಾಪಿಸುವಂತೆ ಹಿಂದಿನ ಸಭೆಯಲ್ಲಿ ತಿಳಿಸಿದ್ದು ಈ ಬಗ್ಗೆ ಕೇಳಿದಾಗ ಎಸ್‍ಪಿ ಯವರು, ಹೆಬ್ಬಾಳ ಟೋಲ್ ಮತ್ತು ದಾವಣಗೆರೆ ಪ್ರವೇಶ, ನ್ಯಾಮತಿ ಹೊನ್ನಾಳಿಯಲ್ಲಿ ಚೆಕ್‍ಪೋಸ್ಟ್ ಸ್ಥಾಪಿಸಿ ಕ್ರಮ ವಹಿಸಲಾಗುತ್ತಿದೆ ಎಂದರು.

ದಾವಣಗೆರೆ, ಹೊನ್ನಾಳಿ, ಚನ್ನಗಿರಿ, ಹರಿಹರ, ಜಗಳೂರು ತಾಲ್ಲೂಕುಗಳ ತಹಶೀಲ್ದಾರರೊಂದಿಗೆ ಸಚಿವರು ಮಾತನಾಡಿ ತಾಲ್ಲೂಕುಗಳಲ್ಲಿ ಕೋವಿಡ್ ವಸ್ತುಸ್ಥಿತಿ ಕುರಿತು ಮಾಹಿತಿ ಪಡೆದುಕೊಂಡು ತಾಲ್ಲೂಕುಗಳಲ್ಲಿ ರೈತರ ಚಟುವಟಿಕೆ ಮತ್ತು ಹರಿಹರದಂತಹ ತಾಲ್ಲೂಕಿನಲ್ಲಿ ಕೈಗಾರಿಕೆ ಚಟುವಟಿಕೆ ಇತರೆ ಕಟ್ಟಡ ಕಾಮಗಾರಿಗಳಿಗೆ ತೊಂದರೆ ಆಗದಂತೆ ತಹಶೀಲ್ದಾರರು ಕ್ರಮ ಕೈಗೊಳ್ಳಬೇಕು.

ಜೊತೆಗೆ ತಾಲ್ಲೂಕು ಟಾಸ್ಕ್‍ಫೋರ್ಸ್, ಗ್ರಾ.ಪಂ ಹಾಗೂ ಬೂತ್ ಮಟ್ಟದಲ್ಲಿ ಟಾಸ್ಕ್‍ಫೋರ್ಸ್ ಸಮಿತಿಗಳು ಸಕ್ರಿಯವಾಗಿ ಕೋವಿಡ್ ನಿರ್ವಹಣೆಯಲ್ಲಿ ಪಾಲ್ಗೊಳ್ಳಬೇಕು. ಹಾಗೂ ಪಿಡಿಓ, ಆಶಾ, ಅಂಗನವಾಡಿ ಸೇರಿದಂತೆ ಹಿಂದೆ ಸಕ್ರಿಯವಾಗಿದ್ದ ಎಲ್ಲ ಸಿಬ್ಬಂದಿಗಳನ್ನೊಳಗೊಂಡು ಕಾರ್ಯ ನಿರ್ವಹಿಸಬೇಕೆಂದು ಸೂಚನೆ ನೀಡಿದರು.

ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ ಮಾತನಾಡಿ, ನಗರವನ್ನು ಮೂರು ವಲಯಗಳನ್ನಾಗಿ ವಿಂಗಡಿಸಿ ಮೂರು ತಂಡಗಳನ್ನು ರಚಿಸಿ ಕೋವಿಡ್ ನಿಯಮ ಉಲ್ಲಂಘನೆ ಬಗ್ಗೆ ಕ್ರಮ ವಹಿಸಲಾಗುತ್ತಿದೆ. 45 ವಾರ್ಡುಗಳಲ್ಲಿ ತಳ್ಳುಗಾಡಿಗಳ ಮೂಲಕ ತರಕಾರಿ ವ್ಯಾಪಾರಕ್ಕೆ ಅನುವು ಮಾಡಿಕೊಡಲಾಗಿದೆ. ಇದುವರೆಗೆ ನಿಯಮ ಉಲ್ಲಂಘಿಸಿದ ಬಟ್ಟೆ ಸೇರಿದಂತೆ ಇತರೆ ಅಂಗಡಿಗಳಿಗೆ ರೂ.1,84,800 ದಂಡ ವಿಧಿಸಲಾಗಿದ್ದು, ಮಾಸ್ಕ್ ಧರಿಸದೇ ಇರುವವರಿಂದ ರೂ.67,350 ದಂಡ ಸಂಗ್ರಹಿಸಲಾಗಿದೆ ಎಂದರು.

ಸಚಿವರು ಮಾತನಾಡಿ, ಇದೊಂದು ಸಂದಿಗ್ಧ ಪರಿಸ್ಥಿತಿಯಾಗಿದ್ದು, ಅಧಿಕಾರಿಗಳು ಯಾವುದೇ ಮುಲಾಜಿಗೆ ಗುರಿಯಾಗದೇ ಎಚ್ಚರಿಕೆಯಿಂದ ಕೋವಿಡ್ ನಿರ್ವಹಣೆ ಕೆಲಸ ಮಾಡಬೇಕು. ಹಾಗೂ ರೋಗಿಗಳು, ಮತ್ತಾರಿಂದಲೂ ದೂರುಗಳು ಬಾರದಂತೆ ಅತ್ಯುತ್ತಮವಾಗಿ ಕೆಲಸ ನಿರ್ವಹಿಸಿಕೊಂಡು ಹೋಗಬೇಕೆಂದು ಸೂಚನೆ ನೀಡಿದರು.

ಸಭೆಯಲ್ಲಿ ಎಡಿಸಿ ಪೂಜಾರ ವೀರಮಲ್ಲಪ್ಪ, ಎಸಿ ಮಮತಾ ಹೊಸಗೌಡರ್, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ, ಎಸ್‍ಎಲ್‍ಓಗಳಾದ ರೇಷ್ಮಾ ಹಾನಗಲ್, ಸರೋಜ, ತಹಶೀಲ್ದಾರ್ ಗಿರೀಶ್, ಆರ್‍ಸಿಹೆಚ್‍ಓ ಡಾ.ಮೀನಾಕ್ಷಿ, ಡಾ. ನಟರಾಜ್, ಡಾ.ಗಂಗಾಧರ್, ಡಾ.ರೇಣುಕಾರಾಧ್ಯ, ಡಾ.ಯತೀಶ್, ಟಿಹೆಚ್‍ಓ ಡಾ.ವೆಂಕಟೇಶ್, ಇತರೆ ಅಧಿಕಾರಿಗಳು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version