ದಿನದ ಸುದ್ದಿ

ಬೆಂಬಲ ಬೆಲೆ | ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಪ್ರಾರಂಭ: ಡಿಸಿ ಗಂಗಾಧರಸ್ವಾಮಿ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆದ ಮೆಕ್ಕೆಜೋಳವನ್ನು ಬುಧುವಾರದಿಂದ ರೈತರಿಂದ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ರವರು ತಿಳಿಸಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮೆಕ್ಕೆಜೋಳ ಖರೀದಿ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರತಿ ರೈತರಿಂದ ಎಕರೆಗೆ 12 ಕ್ವಿಂಟಾಲ್ ಹಾಗೂ ಗರಿಷ್ಠ 50 ಕ್ವಿಂಟಾಲ್‌ನಂತೆ ಮೆಕ್ಕೆಜೋಳ ಉತ್ಪನ್ನವನ್ನು ಬೆಂಬಲ ಬೆಲೆ ದರ ಪ್ರತಿ ಕ್ವಿಂಟಾಲ್‌ಗೆ ರೂ.2400.00 ರಂತೆ ಖರೀದಿಸಲಾಗುವುದು. ಮೆಕ್ಕೆಜೋಳ ಖರೀದಿದಾರರು ಡಿಸ್ಟಿಲರಿ ಮಾಲೀಕರಿಂದ ಮಾರಾಟದ ಮೊತ್ತ ಪಡೆದ ದಿನಾಂಕದಿಂದ ಮೂರು ದಿನಗಳಲ್ಲಿ ಸಂಬಂಧಪಟ್ಟ ರೈತರಿಗೆ ಡಿಬಿಟಿ ಮೂಲಕ ಪಾವತಿಸಲಾಗುವುದು. ಖರೀದಿ ಪ್ರಕ್ರಿಯೆಗೆ ಎನ್‌ಇಎಂಎಲ್ (NEML) ಸಂಸ್ಥೆಯ ತಂತ್ರಾಂಶ ಅಳವಡಿಸಿಕೊಂಡು ಸರ್ಕಾರದ ಪ್ರೂಟ್ಸ್ ಪೊರ್ಟಲ್(FRUITS Portal) ಮತ್ತು ಡಿಬಿಟಿ ಸಂಯೋಜನೆಯೊಂದಿಗೆ ರೈತರ ನೊಂದಣಿ ಕಾರ್ಯ ನಿರ್ವಹಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸುವಂತೆ ತಿಳಿಸಿದರು.

ಜಿಲ್ಲೆಯಲ್ಲಿ 730 ಮೆಟ್ರಿಕ್ ಟನ್ ಮೆಕ್ಕೆಜೋಳ ಖರೀದಿಸಲು ಗುರಿಯನ್ನು ಹೊಂದಲಾಗಿದೆ. ರೈತರು ಮೆಕ್ಕೆಜೋಳ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಿ ಇದರ ಪ್ರಯೋಜನೆ ಪಡೆದುಕೊಳ್ಳುವಂತೆ ತಿಳಿಸಿದರು. ಸಹಕಾರ ಇಲಾಖೆ ಮತ್ತು ಎಪಿಎಂಸಿ ಅಧಿಕಾರಿಗಳು ಮೆಕ್ಕೆಜೋಳ ಖರೀದಿ ಕುರಿತು ಮಾಹಿತಿಯುಳ್ಳ ಕರಪತ್ರಗಳನ್ನು ಮುದ್ರಿಸಿ ರೈತರಿಗೆ ನೀಡಬೇಕು. ಮೆಕ್ಕೆಜೋಳ ಖರೀದಿಯಲ್ಲಿ ಯಾವುದೇ ಗೊಂದಲ ಆಗದಂತೆ ಅಧಿಕಾರಿಗಳು ಕ್ರಮವಹಿಸುವಂತೆ ತಿಳಿಸಿದರು.

ಸಭೆಯಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಮಧುಸೂಧನ್, ಸಹಕಾರ ಇಲಾಖೆ ಉಪನಿಬಂಧಕ ಮಧು ಶ್ರೀನಿವಾಸ್, ಅಬಕಾರಿ ಇಲಾಖೆಯ ಉಪ ಆಯುಕ್ತ ಜುನೈದ್ , ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಜಿಯಾವುಲ್ಲಾ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ರಾಘವೇಂದ್ರ ಪ್ರಸಾದ್ ಹಾಗೂ ಇತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version