Connect with us

ದಿನದ ಸುದ್ದಿ

ಜನ್ಮದಿನದ ಹೊತ್ತಲಿ ಮಹಾತ್ಮನನ್ನು ನೆನೆಯುತ್ತಾ, ನಮಿಸುತ್ತಾ..!

Published

on

  • ಕವಿರಾಜ್, ಗೀತರಚನೆಕಾರ, ಬೆಂಗಳೂರು

ಮ್ಮೆಲ್ಲರ ಹಾಗೂ ಇಂದು ಬಲಪಂಥೀಯರೆಂದು ಹೇಳಿಕೊಳ್ಳುವ ಬಹುತೇಕರ ತಾತ ಮುತ್ತಾತಂದಿರು / ಅಜ್ಜ ಅಜ್ಜಿಯಂದಿರು ಗಾಂಧೀಜಿ, ನೆಹರೂ, ಸ್ವಾತಂತ್ರ್ಯ ಹೋರಾಟದ ಕಾಲದಲ್ಲಿ ಬದುಕಿದ್ದವರು. ಎಲ್ಲವನ್ನು ಪ್ರತ್ಯಕ್ಷ ಅನುಭವಿಸಿದ್ದವರು. ಯಾವುದು ಮತ್ತು ಯಾರು ಸರಿ ಯಾವುದು ತಪ್ಪು ಅಂತ ಅವರು ಕಂಡಿದ್ದರು , ಅವರಿಗೆ ಸ್ಪಷ್ಟತೆಯಿತ್ತು .

ಹಾಗಾಗಿ ಅವರೆಲ್ಲಾ ಯಾರ್ಯಾರನ್ನು ಯಾವ್ಯಾವ ಸ್ಥಾನದಲ್ಲಿಡಬೇಕೋ ಅಲ್ಲೇ ಇಟ್ಟಿದ್ದರು.
ಆದರೆ ಕಾಲಕ್ರಮೇಣ ಅವರ ವಿರುದ್ಧ ಸಿದ್ದಾಂತದ ಶಕ್ತಿಗಳು ನಿಧಾನವಾಗಿ ಹೆಡೆಯೆತ್ತಿ ವ್ಯವಸ್ಥಿತ ಅಪಪ್ರಚಾರ ಮಾಡುತ್ತಾ, ಇತಿಹಾಸ ತಿರುಚುತ್ತಾ ಅಂದಿನ ಮಹನೀಯರ ತೇಜೋವಧೆ ಮಾಡುತ್ತಲೇ ಬಂದಿದ್ದಾರೆ. ಸೂಕ್ತ ಅನುಭವ , ಅಧ್ಯಯನ ಎರಡೂ ಇಲ್ಲದ ಇಂದಿನ ಯುವ ಪೀಳಿಗೆ ಆ ಪುಂಖಾನುಪುಂಖ ಸುಳ್ಳುಗಳನ್ನೇ ನಂಬಿ ಉಘೇ ಉಘೇ ಎಂದು ತಮ್ಮ ಗುಂಡಿ ತಾವೇ ತೋಡಿಕೊಳ್ಳುತ್ತಾ ದೇಶವನ್ನು ಅಧೋಗತಿಗೆ ತಳ್ಳುತ್ತಿದ್ದಾರೆ.

ಗಾಂಧೀಜಿ ಅವರ ಜನ್ಮದಿನವಾದ ಇಂದು ನನಗೆ ವಿಶ್ವದ ಅತೀ ಬುದ್ದಿವಂತ ಮೆದುಳು ಎಂದು ಪರಿಗಣಿಸಲಾಗಿರುವ ‘ಆಲ್ಬರ್ಟ್ ಐನ್ ಸ್ಟೈನ್ ‘ ಅವರ ಅಂದಿನ ನಿಖರ ಪ್ರೆಡಿಕ್ಷನ್ ಪದೇ ಪದೇ ಕಾಡುತ್ತಿದೆ. ” ರಕ್ತ ಮಾಂಸಗಳಿಂದ ತುಂಬಿದ್ದ ಇಂತಹ ಉದಾತ್ತ ವ್ಯಕ್ತಿತ್ವವೊಂದು ಈ ಭೂಮಿಯ ಮೇಲೆ ನಡೆದಾಡಿತ್ತು ಎಂದರೆ ಮುಂದಿನ ಪೀಳಿಗೆಗೆ ನಂಬುವುದು ಕಷ್ಟವಾಗಬಹುದು” ಎಂದು ಗಾಂಧೀಜಿ ಅವರ ಕುರಿತಾಗಿ ಅಂದು ಐನ್ ಸ್ಟೈನ್ ಹೇಳಿದ ಮಾತು ಇಂದು ಅಕ್ಷರಶಃ ನಿಜವಾಗಿದೆ.

ಗಾಂಧೀಜಿ ಅವರ ಮಹೋನ್ನತ ಧ್ಯೇಯಗಳು ಇಂದಿನ ಯುವ ಜನಾಂಗಕ್ಕೆ ನಂಬಲು ಆಗದಷ್ಟು ಉನ್ನತವಾಗಿವೆ.
ಎಲ್ಲಾ ಇದ್ದು ತುಂಡು ಬಟ್ಟೆಯುಟ್ಟು ಬದುಕಿದ ಪಕೀರ, ತನ್ನ ನೇತೃತ್ವದಲ್ಲೇ ಸ್ವಾತಂತ್ರ್ಯ ಬಂದರು ಅಧಿಕಾರ ಬಯಸದೇ ಅದೇ ದಿನ ದೂರದ ಊರಲ್ಲಿ ದೀನರ ಸೇವೆಯಲ್ಲಿ ನಿರತರಾದ ನಿಸ್ವಾರ್ಥಿ.

ಸೂರ್ಯ ಮುಳುಗದ ಸಾಮ್ರಾಜ್ಯವನ್ನು ಮಣಿಸಿದ ಕೃಶಕಾಯದ ಸಂತ, ಉಪವಾಸ, ಸತ್ಯಾಗ್ರಹ ,ಅಹಿಂಸೆಗಳು ಹೋರಾಟದ ಆಯುಧಗಳಾಗಬಹುದು ಎಂದು ಜಗತ್ತಿಗೆ ಸಾರಿದ ಮಾನವತಾವಾದಿ ಗಾಂಧೀಜಿ . ಇವೆಲ್ಲವೂ ಅಪ್ಪಟ ಸತ್ಯವಾದರೂ, ಕಳ್ಳರಿಗೆ ,ಸುಳ್ಳರಿಗೆ , ಭ್ರಷ್ಟರಿಗೆ , ಮೂಢರಿಗೆ ಜೈಕಾರ ಹಾಕುತ್ತ ಅವರನ್ನೇ ಆದರ್ಶವಾಗಿ ಇಟ್ಟುಕೊಂಡಿರುವವರಿಗೆ ಐನ್ ಸ್ಟೈನ್ ಅವರು ಹೇಳಿದಂತೆ ಇಂತಹ ಅದ್ಬುತ ವ್ಯಕ್ತಿತ್ವವೊಂದು ಇತ್ತೆಂದು ಜೀರ್ಣಿಸಿಕೊಳ್ಳಲಾಗದೆ ಸುಳ್ಳು ಅನಿಸುವುದು ಸಹಜವೇ ಆಗಿದೆ.

ಇನ್ನೊಬ್ಸ ಮಹಾನ್ ಮಾನವತಾವಾದಿ ಅಂಬೇಡ್ಕರ್ ಮತ್ತು ಗಾಂಧೀಜಿ ಅವರಿಗೂ ಕೆಲವು ವಿಷಯಗಳಲ್ಲಿ ಭಿನ್ನ ನಿಲುವು ಇದ್ದಿದ್ದು ನಿಜ. ಆದರೆ ಅದು ಎರಡು ಸಮಕಾಲೀನ ಪ್ರಖರ ಚಿಂತಕರ ನಡುವೆ ಸಹಜವಾಗಿಯೇ ಹುಟ್ಟಿಕೊಳ್ಳುವ ಭಿನ್ನಾಭಿಪ್ರಾಯಗಳು.

ಮುಖ್ಯವಾಗಿ ಅಂಬೇಡ್ಕರ್ ಅವರಿಗೆ 1935ರಲ್ಲೇ ಮುಸ್ಲಿಂ ಮತ್ತು ಸಿಖ್ ಸಮುದಾಯಕ್ಕೆ ಇದ್ದಂತೆ ಪ್ರತ್ಯೇಕ ಎಲೆಕ್ಟೋರೇಟ್ ಗಳನ್ನು ಪರಿಶಿಷ್ಟರಿಗೂ ಒದಗಿಸಬೇಕೆಂಬ ಆಗ್ರಹವಿತ್ತು . ಆದರೆ ಗಾಂಧೀಜಿಯವರಿಗೆ ಹೀಗೆ ಮಾಡುವುದರಿಂದ ಅವರು ಹಿಂದೂ ಧರ್ಮದಿಂದ ಹೊರಗೆ ಗುರುತಿಸಿಕೊಳ್ಳುತ್ತಾರೆ , ಹಿಂದೂ ಧರ್ಮ ಒಡೆದು ಹೋಗುತ್ತದೆ ಎಂಬ ಆತಂಕವಿತ್ತು.

ಅದರ ಬದಲಾಗಿ ಪರಿಶಿಷ್ಟರು ಮಾತ್ರ ಸ್ಪರ್ಧಿಸಿ ಎಲ್ಲರೂ ಮತದಾನ ಮಾಡುವ ಮೀಸಲು ಕ್ಷೇತ್ರಗಳನ್ನು ನೀಡಬಹುದು ಎಂದು ಗಾಂಧೀಜಿಯವರ ನಿಲುವಾಗಿತ್ತು.
ಈ ವ್ಯವಸ್ಥೆಯಲ್ಲಿ ಅಂಬೇಡ್ಕರ್ ಅವರು ಪ್ರತ್ಯೇಕ ಎಲೆಕ್ಟೋರೇಟ್ ಅಲ್ಲಿ ಆಗ್ರಹಿಸಿದಕ್ಕಿಂತ ಮೂರು ಪಟ್ಟು ಹೆಚ್ಚು ಸ್ಥಾನಗಳನ್ನು ನೀಡಲು ಗಾಂಧೀಜಿ ಪ್ರಸ್ತಾಪವಿತ್ತರು.

ಇದಕ್ಕಾಗಿ ಅಂಬೇಡ್ಕರ್ ಅವರ ಮೇಲೆ ಒತ್ತಡ ಹೇರಲು ಗಾಂಧೀಜಿ ಅವರು ಯರವಾಡ ಜೈಲಿನಲ್ಲೇ ಉಪವಾಸ ಕುಳಿತರು. ಅದು ಗಾಂಧೀಜಿ ಅವರ ಆಶಯದಂತೆ ಅಸ್ಪ್ರಶ್ಯತಾ ನಿವಾರಣ ಚಳುವಳಿ ಇಡೀ ದೇಶದಲ್ಲಿ ಹಬ್ಬಲು ನಾಂದಿಯಾಯಿತು. ಕೊನೆಗೆ ಮನಸ್ಸಿಲ್ಲದ ಮನಸ್ಸಿನಿಂದ ಅಂಬೇಡ್ಕರ್ ಗಾಂಧೀಜಿಯವರ ಪ್ರಸ್ತಾಪ ಒಪ್ಪಿಕೊಳ್ಳಬೇಕಾಯಿತು.

ಒಟ್ಟಾರೆ ಅಸ್ಪ್ರಶ್ಯತೆ ನಿವಾರಣೆ ಆಗಬೇಕೆಂಬುದು ಇಬ್ಬರು ಮಹನೀಯರ ಧ್ಯೇಯವಾಗಿತ್ತು. ವಿಪರ್ಯಾಸವೆಂದರೆ ಅಂದು ಯಾವ ಹಿಂದೂ ಧರ್ಮದ ಏಕತೆಗಾಗಿ ಗಾಂಧೀಜಿ ಅಂಬೇಡ್ಕರ್ ಅವರ ಪ್ರಸ್ತಾಪವನ್ನು ವಿರೋಧಿಸಿದರೋ ಇಂದು ಅದೇ ಹಿಂದೂ ಧರ್ಮದ ಕಟ್ಟಾ ಪ್ರತಿಪಾದಕರು ಅಂಬೇಡ್ಕರ್ ಅನುಯಾಯಿಗಳನ್ನು ಗಾಂಧೀಜಿ ಅವರ ವಿರುದ್ಧ ಎತ್ತಿಕಟ್ಟುತ್ತಿದ್ದಾರೆ.

ಅಂಬೇಡ್ಕರ್ ಅವರ ಮೇಲೆ ಗಾಂಧೀಜಿ ಅವರಿಗೆ ವ್ಯಕ್ತಿಗತ ವಿರೋಧವಿದ್ದರೆ ದೇಶದ ಸಂವಿಧಾನ ರಚನೆಯಂತ ಮಹೋನ್ನತ ಜವಾಬ್ದಾರಿ ಅಂಬೇಡ್ಕರ್ ಅವರ ಹೆಗಲಿಗೇರಲು , ಅಂಬೇಡ್ಕರ್ ಅವರು ದೇಶದ ಮೊದಲ ಕಾನೂನು ಮಂತ್ರಿಯಾಗಲು ವಿರೋಧಿಸಬೇಕಿತ್ತಲ್ಲವೇ ???

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ

Published

on

ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು. ಈ ಬಗ್ಗೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.

ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸುಮಾರು 30 ಸಾವಿರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಿಬ್ಬಂದಿಗಳಿಗೆ ನೇಮಕಾತಿ ಮತ್ತು ವರ್ಗಾವಣೆ ಒಳಗೊಂಡು ಮಾನವ ಸಂಪನ್ಮೂಲ (HR Policy) ನೀತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕಳೆದ ಅ.28ರಂದು ಆದೇಶ ಹೊರಡಿಸಿ, ಅಭಿಯಾನ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಆರ್ಥಿಕ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಿದ್ದಾರೆ.

ಈ ವಿಷಯದ ಬಗ್ಗೆ ಈಗಾಗಲೇ ಅಭಿಯಾನ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಗುತ್ತಿಗೆ ನೌಕರರ ವೃಂದವಾರು ಸಂಘಟನೆಗಳ ಅಭಿಪ್ರಾಯ ನೀಡಲಾಗಿದೆ. ಎಲ್ಲಾ ಸಂಘಟನೆಗಳು ಈ ಒಂದು ಹೊಸ ಸಿಬ್ಬಂದಿಗಳಿಗೆ ಮಾರಕ ಇರುವಂತಹ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೊಳಿಸಲು ವಿರೋಧ ವ್ಯಕ್ತಪಡಿಸಿವೆ.

ಸರ್ಕಾರ ಈಗ ನೀಡುತ್ತಿರುವ ಕಡಿಮೆ ವೇತನದಲ್ಲಿ ಈ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಖಾಯಂ ಸಿಬ್ಬಂದಿಗಳಂತೆ ಕಡ್ಡಾಯ ವರ್ಗಾವಣೆ ಮಾಡಿದರೆ ಈ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಮೂರು ಮೂರು ತಿಂಗಳಿಗೊಮ್ಮೆ ವೇತನ ಆಗುತ್ತಿದ್ದು ಬೇರೆ ಜಿಲ್ಲೆಗೆ ಕಡ್ಡಾಯ ವರ್ಗಾವಣೆ ಮಾಡಿದ್ದರೆ ಮನೆ ಬಾಡಿಗೆ ಕಟ್ಟಲಾಗದೇ ಬೀದಿಗೆ ಬರಬೇಕಿದೆ ಎಂದು ಶಾಸಕರಿಗೆ ಮನವರಿಕೆ ಮಾಡಿದರು.

ಒಂದು ವೇಳೆ ಇಂತಹ ಕ್ರಮ ಕೈಗೊಂಡರೆ ಖಾಯಂ ಸಿಬ್ಬಂದಿಗಳಿಗೆ ನೀಡಿದಂತೆ ಎಲ್ಲಾ ಸೌಕರ್ಯ ಹಾಗೂ ಖಾಯಂ ಸೇರಿದಂತೆ ವೇತನ ಹೆಚ್ಚಳ ಮಾಡಿ, ಟಿಎ, ಡಿಎ, ಎಚ್ ಆರ್ ಎ ನೀಡಿ ಇಂತಹ ಆದೇಶ ಮಾಡಬೇಕು. ಸಿಬ್ಬಂದಿಗಳಿಗೆ ಬೆನ್ನು ತಟ್ಟಿ ಕೆಲಸ ಮಾಡಿಸಿಕೊಳ್ಳಬೇಕು.ಅದು ಬಿಟ್ಟು ಹೊಟ್ಟೆ ಮೇಲೆ ಹೊಡೆಯುವಂತಹ ಯಾವುದೇ ಆದೇಶ ಹೊರಡಿಸುವುದು ಎಷ್ಟು ಸರಿ ಎಂದು ಸಿಬ್ಬಂದಿಗಳು ಪ್ರಶ್ನೆ ಮಾಡಿದ್ದಾರೆ.

ಪ್ರಧಾನ ಕಾರ್ಯದರ್ಶಿಗಳ ಈ ಒಂದು ಪತ್ರ 30 ಸಾವಿರ ನೌಕರರಿಗೆ ಆತಂಕ ಸೃಷ್ಟಿ ಮಾಡಿದೆ. ಇದು ಈ ವರ್ಷದಲ್ಲಿ ಮೊದಲ ಸಾರಿ ಅಲ್ಲದೆ ಇದೇ ವರ್ಷ ಸಾಕಷ್ಟು ಮಾನಸಿಕ ಒತ್ತಡ ಹೆಚ್ಚಳವಾಗಿರುವ ಅನೇಕ ಆದೇಶ ಮಾಡಿದ್ದಾರೆ.

ಪ್ರತಿ ವರ್ಷ ಏಪ್ರಿಲ್ ಒಂದನೇ ತಾರೀಖು ಎಲ್ಲಾ ನೌಕರರಿಗೆ ಒಂದು ದಿವಸ ವಿರಾಮ ನೀಡಿ ಮುಂದುವರೆಸುತ್ತಿದ್ದು 2005 ರಿಂದ ಸುಮಾರು 20 ವರ್ಷಗಳವರೆಗೆ ಈ ಪದ್ಧತಿ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಏಕಾಏಕಿ ಕೇವಲ 15 ದಿವಸ ವಿಸ್ತರಣೆ ನೀಡಿ, ತದನಂತರ ಒಂದು ತಿಂಗಳು ವಿಸ್ತರಣೆ ನೀಡಿ ಆಮೇಲೆ ಮೂರು ತಿಂಗಳ ವಿಸ್ತರಣೆ ನೀಡಿ ತದನಂತರ ಸಿಬ್ಬಂದಿಗಳಿಗೆ ಕರ್ತವ್ಯದಿಂದ ವಿಮುಕ್ತಿಗೊಳಿಸುವ ಆದೇಶ ನೀಡಿದ್ದು ನಮ್ಮ ಸಂಘಟನೆಯಿಂದ ಕೋರ್ಟ್ ನಲ್ಲಿ ದಾವೆ ಹೂಡಿದ್ದು ಇದೆ, ಕಳೆದ 8 ತಿಂಗಳಲ್ಲಿ ವೇತನ ಪಡೆಯಲು ಸರಿಯಾಗಿ ಅನುದಾನ ಬಿಡುಗಡೆ ಆಗದೇ ಸಿಬ್ಬಂದಿಗಳು ಪರದಾಡುವಂತಾಗಿದೆ. ಈ ಬಗ್ಗೆ ಸದನದಲ್ಲಿ ಗಮನ ಸೆಳೆದು ನಮಗೆ ನ್ಯಾಯ ಕೊಡಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್, ಸುನೀಲ್, ಸುರೇಶ್, ಮಹಾಲಿಂಗಪ್ಪ, ಬಸವರಾಜ್, ದೊಡ್ಡಮನಿ, ಡಾ.ರೇಣುಕಾ, ಇನ್ನಿತರರಿದ್ದರು‌.”

  • ಪ್ರಧಾನ ಕಾರ್ಯದರ್ಶಿಗಳ ಆದೇಶ ರದ್ದುಗೊಳಿಸಲು ಎನ್ ಎಚ್ ಎಂ ಸಿಬ್ಬಂದಿಗಳು ಆಗ್ರಹ
  • ಈ ಬಗ್ಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ಸಿಬ್ಬಂದಿಗಳ ಮನವಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

Published

on

ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ ಶಿವಕುಮಾರ್ ಅವರು ಇಮ್ಮಡಿ ಪುಲ್ಲಕೇಶಿ ಸಾಮ್ರಾಟ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ನಂತರ ಜಿಲ್ಲಾಧ್ಯಕ್ಷರಾದ ಶಿವರತನ್ ಮಾತನಾಡಿ ,ನಾಡಿನ ಇತಿಹಾಸ ಪುಟಗಳಲ್ಲಿ ಕಣ್ಮರೆಯಾಗಿರುವ ಕನ್ನಡದ ಶ್ರೇಷ್ಠ ಸಾಮ್ರಾಟರಲ್ಲಿ ಇಮ್ಮಡಿ ಪುಲಿಕೇಶಿ ಅಗ್ರ ಸ್ಥಾನ ಪಡೆದಿದ್ದಾರೆ. ಇಂತಹ ಮಹಾನ್ ಸಾಮ್ರಾಟರನ್ನ ನೆನಪಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿಯನ್ನು ನಾವೆಲ್ಲರೂ ಹೊರಬೇಕಾಗಿದೆ ಎಂದರು.

ಭಾರತೀಯ ನೌಕಾಪಡೆಯ ಪಿತಾಮಹ ಎಂದೇ ಕರೆಯಲಾಗುವ ಇಮ್ಮಡಿ ಪುಲಿಕೇಶಿ ಸಾಮ್ರಾಟರ ಜನ್ಮದಿನದ ಪ್ರಯುಕ್ತ ಭಾರತೀಯ ನೌಕಾಪಡೆ ದಿನಾಚರಣೆಯೆoದು ಆಚರಿಸುವುದು ಕನ್ನಡಿಗರಿಗೆ ಹೆಮ್ಮೆಯ ವಿಚಾರ.

ಬೇರೆಲ್ಲ ಜಯಂತಿಗಳನ್ನು ಆಚರಿಸುವ ಸರ್ಕಾರಗಳು ಇಮ್ಮಡಿ ಪುಲಿಕೇಶಿ ಜಯಂತಿಯನ್ನು ಕಡ್ಡಾಯವಾಗಿ ಎಲ್ಲೆಡೆ ಆಚರಿಸಲು ಆಡಳಿತಾತ್ಮಕವಾಗಿ ಜಾರಿಗೊಳಿಸಲು ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.

ಮಹಿಳಾ ಅಧ್ಯಕ್ಷೆ ಶುಭಮಂಗಳ ಅವರು ಸಿಹಿ ವಿತರಿಸಿದರು. ಕನ್ನಡ ಚಳವಳಿಯ ಹಿರಿಯ ಹೋರಾಟಗಾರರು , ಕನ್ನಡ ಚಳವಳಿಯ ಮಾಜಿ ಅಧ್ಯಕ್ಷರಾದ ಬಂಕಾಪುರ ಚನ್ನಬಸಪ್ಪ, ದಾ.ಹ. ಶಿವಕುಮಾರ್. ಈಶ್ವರ್. ಪ್ರಕಾಶ್. ವಾರ್ತಾ ಇಲಾಖೆ ನಿವೃತ್ತ ಬಿ.ಎಸ್. ಬಸವರಾಜ್ ಹಾಗೂ ಹಲವಾರು ಕನ್ನಡಪರ ಹೋರಾಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಯನ್ನು ಉಪನಿರ್ದೇಶಕರು ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಾವಣಗೆರೆ ಪಡೆದು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 24 ರೊಳಗಾಗಿ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯ ರಸ್ತೆ, ಕುವೆಂಪುನಗರ, ಎಂ.ಸಿ.ಸಿ, ‘ಬಿ’ ಬ್ಲಾಕ್, ದಾವಣಗೆರೆ ದೂ.ಸಂ:08192-264056 ಸಲ್ಲಿಸಬೇಕೆಂದು ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending