ದಿನದ ಸುದ್ದಿ
ಮೋದಿಯವರೇ, ಪರದೆಯಲ್ಲಿ ಮತ್ತೆಮತ್ತೆ ಮುಖ ತೋರಿಸಿದರೆ ಕೊರೊನಾ ವೈರಸ್ ಓಡಿಹೋಗುವುದಿಲ್ಲ, ಮುಖ್ಯಮಂತ್ರಿಗಳಿಗೆ ಆಗಾಗ ಪಾಠಮಾಡಲು ನೀವು ಹೆಡ್ಮಾಸ್ಟರ್ ಕೂಡಾ ಅಲ್ಲ : ಸಿದ್ದರಾಮಯ್ಯ ಕಿಡಿ
ಸುದ್ದಿದಿನ ಡೆಸ್ಕ್ : ಪ್ರಧಾನಿ ನರೇಂದ್ರ ಮೋದಿ ಅವರೇ, ಪರದೆಯಲ್ಲಿ ಮತ್ತೆಮತ್ತೆ ಮುಖ ತೋರಿಸಿದರೆ ಕೊರೊನಾ ವೈರಸ್ ಓಡಿಹೋಗುವುದಿಲ್ಲ, ಆಗಾಗ ಮುಖ್ಯಮಂತ್ರಿಗಳಿಗೆ ಪಾಠಮಾಡಲು ನೀವು ಹೆಡ್ಮಾಸ್ಟರ್ ಕೂಡಾ ಅಲ್ಲ.ಮೊದಲು ರಾಜ್ಯಗಳ ಬೇಡಿಕೆಗಳನ್ನು ಈಡೇರಿಸಿ ಕೊರೊನಾ ವೈರಸ್ ನಿಯಂತ್ರಿಸಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಕೊರೋನಾ ನಿಯಂತ್ರಣಕ್ಕೆ ಸಿಗದೆ ಮರಣ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅವರು ಸರಣಿ ಟ್ವೀಟ್ ಮಾಡಿದ್ದಾರೆ.
ಪ್ರತಿಯೊಂದು ರಾಜ್ಯದಲ್ಲಿ ಕೊರೊನಾ ಸೋಂಕಿತರು ಆಮ್ಲಜನಕ ಇಲ್ಲದೆ ಸಾಯುತ್ತಿದ್ದಾರೆ. ಆಮ್ಲಜನಕ ಪೂರೈಕೆ ಮಾಡಿ ಎಂದರೆ ಅಕ್ರಮ ದಾಸ್ತಾನು ಮಾಡಿದವರ ಮೇಲೆ ಕ್ರಮಕೈಗೊಳ್ಳಿ ಎಂದು ಕರೆ ನೀಡುತ್ತೀರಿ. ನೀವೇನು ರಾಜ್ಯಗಳ ಅನುಮತಿ ಪಡೆದು ಆಮ್ಲಜನಕ ರಪ್ತು ಮಾಡಿದ್ದೀರಾ ಮೋದಿಯವರೇ?
ಇದನ್ನೂ ಓದಿ | ಪಂಡರಹಳ್ಳಿ ಹಾಗೂ ದುಮ್ಮಿಯಲ್ಲಿ ಜಾತ್ರೆ ಮಾಡಿದವರ ಮೇಲೆ ಪ್ರಕರಣ ದಾಖಲು : ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಕೇರಿ
ಬೆಂಗಳೂರಿನ ಖಾಸಗಿ/ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತರಿಗೆ ಮೀಸಲಾದ ಹಾಸಿಗೆಗಳು 7621,
ಭರ್ತಿಯಾಗಿರುವುದು 6123, ಲಭ್ಯ ಇರುವುದು 1487.
ನಿತ್ಯ ದಾಖಲಾಗುತ್ತಿರುವ ಸೋಂಕಿತರ ಸಂಖ್ಯೆ 15ಸಾವಿರಕ್ಕೂ ಹೆಚ್ಚು. ಈ ವಾಸ್ತವವನ್ನು ಮುಖ್ಯಮಂತ್ರಿಗಳು ನಿಮಗೇನಾದರೂ ತಿಳಿಸಿದ್ದಾರೆಯೇ ಪ್ರಧಾನಿಗಳೇ? ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರಿನಲ್ಲಿ ಶೇ 65ರಷ್ಟು ಸಾಮಾನ್ಯ ಹಾಸಿಗೆ,
ಶೇ 96ರಷ್ಟು ಬಹು ಅವಲಂಬನೆಯ ಹಾಸಿಗೆ,
ಶೇ 98ರಷ್ಟು ಐಸಿಯು ಹಾಸಿಗೆ ಮತ್ತು ಶೇ 97ರಷ್ಟು ವೆಂಟಿಲೇಟರ್ ಹಾಸಿಗೆ ಭರ್ತಿಯಾಗಿವೆ. ನಿತ್ಯ 15 ಸಾವಿರಕ್ಕೂ ಹೆಚ್ಚು ಸೋಂಕಿತರು ಆಸ್ಪತ್ರೆ ಎದುರು ಕ್ಯೂ ನಿಲ್ಲುತ್ತಿದ್ದಾರೆ. ಅವರದ್ದೇನು ಗತಿ ಪ್ರಧಾನಿಯವರೇ ?
‘ಪರಿಸ್ಥಿತಿ ಕೈಮೀರಿಹೋಗಿದೆ’ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜನತೆಯ ಮುಂದೆ ಗೋಳಾಡುತ್ತಿರುವುದರಿಂದ ಪ್ರಶ್ನೆ ನಿಮ್ಮನ್ನೇ ಕೇಳಬೇಕಾಗಿದೆ. ಕೈಲಾಗದ ಮುಖ್ಯಮಂತ್ರಿಯವರನ್ನು ಇಟ್ಟುಕೊಂಡು ಕೊರೊನಾ ನಿಯಂತ್ರಣ ಮಾಡುವುದಾದರೂ ಹೇಗೆ ಪ್ರಧಾನಿಗಳೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243